Wednesday, May 23, 2012

ಅರವತ್ತು ತುಂಬಿದೆ ಎಂದು ಸಂಭ್ರಮ ಪಡೋಣವೇ? May 21, 2012

ಮೊದಲ cಯಲ್ಲಿ ಶೇ 58ರಷ್ಟಿದ್ದ ಪದವೀಧರ ಸದಸ್ಯರ ಪ್ರಮಾಣ ಈಗ 79ಕ್ಕೆ ಏರಿದೆ.  ಸ್ನಾತಕೋತ್ತರ ಪದವೀಧರ ಸದಸ್ಯರ ಪ್ರಮಾಣ ಶೇ 18ರಿಂದ 29ಕ್ಕೆ ಹೆಚ್ಚಿದೆ ಮತ್ತು ಕೇವಲ ಏಳನೆ ತರಗತಿವರೆಗೆ ಓದಿದ ಸದಸ್ಯರ ಪ್ರಮಾಣ ಶೇ 52ರಿಂದ 9ಕ್ಕೆ ಇಳಿದಿದೆ. ವಯಸ್ಸಾದವರು ಅನುಭವಿಗಳೂ ಹೌದು ಎನ್ನುವುದಾದರೆ ಲೋಕಸಭೆಯಲ್ಲಿ ಅನುಭವಿಗಳ ಸಂಖ್ಯೆ ಹೆಚ್ಚಾಗಿದೆ.

ಮೊದಲ ಲೋಕಸಭೆಯಲ್ಲಿ 56ಕ್ಕಿಂತ ಹೆಚ್ಚು ವಯಸ್ಸಾದವರ ಪ್ರಮಾಣ ಕೇವಲ ಶೇ 26ರಷ್ಟಿದ್ದರೆ, ಈಗ ಅದು ಶೇ 43ಆಗಿದೆ. 70ಕ್ಕಿಂತ ಹೆಚ್ಚು ವಯಸ್ಸಾದವರ ಪ್ರಮಾಣ ಈಗ ಶೇ 7ರಷ್ಟಿದ್ದರೆ ಮೊದಲ ಲೋಕಸಭೆಯಲ್ಲಿ ಈ ವಯಸ್ಸಿನ ಸದಸ್ಯರೇ ಇರಲಿಲ್ಲ.

ಸಂಸತ್ ಸದಸ್ಯರ `ಹುಡುಗಾಟ` ಕೂಡಾ ಕಡಿಮೆಯಾಗಿದೆ. 40ಕ್ಕಿಂತಲೂ ಕಡಿಮೆ ವಯಸ್ಸಿನ ಸದಸ್ಯರ ಸಂಖ್ಯೆ ಶೇ 26ರಿಂದ 14ಕ್ಕೆ ಇಳಿದಿದೆ. ಮಹಿಳಾ ಮೀಸಲಾತಿ ಜಾರಿಗೆ ಬರದೆ ಇದ್ದರೂ ಲೋಕಸಭೆಯಲ್ಲಿ ಮಹಿಳಾ ಸದಸ್ಯರ ಶೇ 5ರಿಂದ 15ಕ್ಕೆ ಏರಿದೆ.

ನಮ್ಮ ಈಗಿನ ಸಂಸದರು ಮಾಡುತ್ತಿರುವುದು `ಬಿಟ್ಟಿ ಚಾಕರಿ` ಅಲ್ಲ. ಎರಡು ವರ್ಷಗಳ ಹಿಂದೆಯಷ್ಟೆ ಸಂಸದರು ತಮ್ಮ ಸಂಬಳ ಮತ್ತು ಭತ್ಯೆಯನ್ನು 300 ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಈಗ ಅವರು ಪ್ರತಿ ತಿಂಗಳು ಮೂಲವೇತನ, ಕ್ಷೇತ್ರ ಭತ್ಯೆ ಮತ್ತು ಕಚೇರಿ ಭತ್ಯೆ ರೂಪದಲ್ಲಿ 1.40 ಲಕ್ಷ ರೂ ಪಡೆಯುತ್ತಿದ್ದಾರೆ. ಇದರ ಜತೆಗೆ ಅಧಿವೇಶನ ನಡೆಯುವ ದಿನಗಳಲ್ಲಿ ದಿನಭತ್ಯೆ 2000 ರೂ ಪಡೆಯುತ್ತಾರೆ.

ವರ್ಷದಲ್ಲಿ 34 ಬಾರಿ ಉಚಿತ ವಿಮಾನ ಪ್ರಯಾಣ, ಪ್ರಥಮದರ್ಜೆ ರೈಲಿನಲ್ಲಿ ಲೆಕ್ಕವಿಲ್ಲದಷ್ಟು ಸಲ ಉಚಿತ ಪ್ರಯಾಣ, ದೆಹಲಿಯಲ್ಲಿ ಉಚಿತ ವಸತಿ, ಉಚಿತ ವಿದ್ಯುತ್,ನೀರು, ದೂರವಾಣಿ ಮತ್ತು ಇಂಟರ್‌ನೆಟ್ ಸೌಲಭ್ಯ ಪಡೆಯುತ್ತಾರೆ.

ಒಂದು ಅಂದಾಜಿನ ಪ್ರಕಾರ ಸಂಸದರ ಮಾಸಿಕ ಸಂಬಳ,ಭತ್ಯೆ ಮತ್ತು ಸೌಲಭ್ಯಗಳ ಒಟ್ಟು ಖರ್ಚು ತಲಾ 5 ಲಕ್ಷ ರೂಪಾಯಿಗಳಷ್ಟಾಗುತ್ತದೆ. ಸಂಸದ ಬಡ ಭಾರತೀಯನ ದುಬಾರಿ ಪ್ರತಿನಿಧಿ!

 ಕಳೆದ 60 ವರ್ಷಗಳಲ್ಲಿ ಸಂಸದರ ಶಿಕ್ಷಣ ಮತ್ತು ಅನುಭವದ ಮಟ್ಟ ಏರಿರುವುದು ಮಾತ್ರವಲ್ಲ ಸಂಬಳ-ಭತ್ಯೆ ಕೂಡಾ ಹೆಚ್ಚಿದೆ. ಹಾಗಿದ್ದರೆ  ಹಿಂದಿಗಿಂತಲೂ ಹೆಚ್ಚು ಶಿಕ್ಷಿತ ಮತ್ತು ಅನುಭವಿಗಳೂ ಆಗಿರುವ, ಆರ್ಥಿಕ ಭದ್ರತೆ ಪಡೆದಿರುವ ಸದಸ್ಯರ ಕಾಣಿಕೆ ಲೋಕಸಭೆಯ ಕಾರ್ಯನಿರ್ವಹಣೆಯಲ್ಲಿ ಪ್ರತಿಫಲನಗೊಳ್ಳಬೇಕಿತ್ತಲ್ಲವೇ? ಅಲ್ಲಿನ ಚಿತ್ರ ಹೀಗಿದೆ:

1950ರಲ್ಲಿ ಲೋಕಸಭೆಯ ಕಲಾಪ 127 ದಿನ ಮತ್ತು ರಾಜ್ಯಸಭೆಯ ಕಲಾಪ 93 ದಿನ ನಡೆದಿದ್ದರೆ 2011ರಲ್ಲಿ ಎರಡೂ ಸದನಗಳ ಕಲಾಪ ತಲಾ 73ದಿನಗಳಿಗೆ ಇಳಿದಿದೆ. ಮೊದಲ ಲೋಕಸಭೆಯ ಅವಧಿಯಲ್ಲಿ ಪ್ರತಿವರ್ಷ ಸರಾಸರಿ 72 ಮಸೂದೆಗಳಿಗೆ ಅಂಗೀಕಾರ ದೊರೆತಿದ್ದರೆ 15ನೇ ಲೋಕಸಭೆಯಲ್ಲಿ ಇದು 40ಕ್ಕೆ ಇಳಿದಿದೆ.

ಕಳೆದ ಚಳಿಗಾಲದ ಅಧಿವೇಶನದವರೆಗೆ 15ನೇ ಲೋಕಸಭೆ, ನಿಗದಿತ ಸಮಯದ ಕೇವಲ ಶೇಕಡಾ 70ರಷ್ಟು ಭಾಗವನ್ನು ಮಾತ್ರ ಬಳಸಿಕೊಂಡಿದೆ. ಇದು ಕಳೆದ 25 ವರ್ಷಗಳ ಅವಧಿಯಲ್ಲಿ ಅತ್ಯಂತ ಕಡಿಮೆ ಅವಧಿ ಕೆಲಸ ಮಾಡಿರುವ ಲೋಕಸಭೆ.

ಯಾಕೆ ಹೀಗಾಗಿದೆ ಎನ್ನುವುದಕ್ಕೆ ಒಂದಷ್ಟು ಮಾಹಿತಿ; ಹದಿನೈದನೆ ಲೋಕಸಭೆಯ 543 ಸದಸ್ಯರು ಚುನಾವಣೆಗೆ ಸ್ವರ್ಧಿಸುವ ಸಂದರ್ಭದಲ್ಲಿ ಸಲ್ಲಿಸಿರುವ ಸ್ವಪರಿಚಯದ ಪ್ರಮಾಣಪತ್ರಗಳ ಅಧ್ಯಯನ ನಡೆಸಿರುವ `ರಾಷ್ಟ್ರೀಯ ಚುನಾವಣಾ ವೀಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಯ ಸಂಘಟನೆ`ಯ ವರದಿಯಲ್ಲಿದೆ.

ಇದರ ಪ್ರಕಾರ ಲೋಕಸಭೆಯಲ್ಲಿರುವ 162 ಸದಸ್ಯರ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳು ವಿಚಾರಣೆಯಲ್ಲಿವೆ. ಇವರಲ್ಲಿ 76 ಸದಸ್ಯರ ವಿರುದ್ಧ ಕೊಲೆ, ಸುಲಿಗೆ, ವಂಚನೆ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪಗಳಿವೆ.

2004ರ ಲೋಕಸಭೆಯಲ್ಲಿ 128 ಸದಸ್ಯರ ವಿರುದ್ಧ ಮಾತ್ರ ಕ್ರಿಮಿನಲ್ ಆರೋಪಗಳಿದ್ದವು. ಕಳೆದ ಲೋಕಸಭೆಗಿಂತ ಕಳಂಕಿತರ ಪ್ರಮಾಣ ಶೇ 24ರಷ್ಟು ಹೆಚ್ಚಾಗಿದೆ.

ಹತ್ತಕ್ಕಿಂತ ಹೆಚ್ಚು ಲೋಕಸಭಾ ಸದಸ್ಯರನ್ನು ಹೊಂದಿರುವ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಕ್ರಿಮಿನಲ್ ಆರೋಪಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದು ಶಿವಸೇನೆ (ಶೇ 82)ಯಲ್ಲಿ.

ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಸಂಯುಕ್ತ ಜನತಾದಳ (ಶೇ 40), ಸಮಾಜವಾದಿ ಜನತಾಪಕ್ಷ (ಶೇ 39) ಬಿಜೆಪಿ (ಶೇ 38),ಬಿಎಸ್‌ಪಿ (ಶೇ 29)ಡಿಎಂಕೆ  (ಶೇ 22) ಕಾಂಗ್ರೆಸ್ (ಶೇ 21) ಮತ್ತು ಸಿಪಿಎಂ (ಶೇ 19) ಇವೆ. ಆರ್‌ಜೆಡಿಯ ನಾಲ್ವರು ಸದಸ್ಯರಲ್ಲಿ ಮೂರು ಮಂದಿ, ಜೆಡಿ (ಎಸ್)ನ ಮೂವರಲ್ಲಿ ಇಬ್ಬರು, ಎಡಿಎಂಕೆಯ ಒಂಬತ್ತರಲ್ಲಿ ನಾಲ್ವರು ಕ್ರಿಮಿನಲ್ ಆರೋಪಿಗಳು.

ಲೋಕಸಭೆಯ ಕಳಂಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿರುವುದು ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳು. ಕ್ರಿಮಿನಲ್ ಆರೋಪದ 163 ಸದಸ್ಯರಲ್ಲಿ 75 ಸದಸ್ಯರು ಈ ಮೂರು ರಾಜ್ಯಗಳಿಗೆ ಸೇರಿದವರು. 28 ಸದಸ್ಯರಲ್ಲಿ ಒಂಬತ್ತು ಮಂದಿ ಕ್ರಿಮಿನಲ್ ಆರೋಪಿಗಳನ್ನು ಹೊಂದಿರುವ ಕರ್ನಾಟಕ ಆರನೇ ಸ್ಥಾನದಲ್ಲಿದೆ.
ಹೀಗಿದ್ದರೂ `ಸಂಸದರು ಕೊಲೆಗಡುಕರು` ಎಂದರೆ ಇವರಿಗೆ ಕೋಪ ಉಕ್ಕಿ ಬರುತ್ತದೆ.
ಭಾರತೀಯರ ವಾರ್ಷಿಕ ತಲಾವಾರು ಆದಾಯ 50,000 ರೂಪಾಯಿ.  ಸಂಸತ್ ಎನ್ನುವುದು ಪ್ರಜೆಗಳ ಪ್ರಾತಿನಿಧಿಕ ಸಂಸ್ಥೆ ಎನ್ನುವುದಾದರೆ ಈ ಬಡಭಾರತವನ್ನೇ ಸಂಸತ್ ಪ್ರತಿನಿಧಿಸಬೇಕಲ್ಲವೇ? ಆದರೆ ನಮ್ಮ ಲೋಕಸಭಾ ಸದಸ್ಯರ ಆಸ್ತಿ ವಿವರವನ್ನು ಗಮನಿಸಿದಾಗ ದೇಶದ ತುಂಬಾ ಕೋಟ್ಯಧಿಪತಿಗಳೇ ತುಂಬಿ ತುಳುಕಾಡುತ್ತಿರಬಹುದೆಂಬ ಅಭಿಪ್ರಾಯ ಮೂಡುತ್ತದೆ.
ಹದಿನೈದನೆ ಲೋಕಸಭೆಯಲ್ಲಿರುವ ಕೋಟ್ಯಧಿಪತಿಗಳ ಸಂಖ್ಯೆ 315. ಸದಸ್ಯರ ಸರಾಸರಿ ವಾರ್ಷಿಕ ಆದಾಯ 5.33 ಕೋಟಿ ರೂ. ಹಿಂದಿನ ಲೋಕಸಭೆಯಲ್ಲಿ ಈ ಸಂಖ್ಯೆ 156 ಮತ್ತು ಸರಾಸರಿ ಆದಾಯ 1.86 ಕೋಟಿ ರೂ ಆಗಿತ್ತು. ಅಂದರೆ ಕೋಟ್ಯಧಿಪತಿಗಳ ಸಂಖ್ಯೆಯಲ್ಲಿ ಶೇ 102ರಷ್ಟು ಮತ್ತು ಸರಾಸರಿ ಆದಾಯದಲ್ಲಿ ಶೇ 186ರಷ್ಟು ಹೆಚ್ಚಳವಾಗಿದೆ.

ಅತಿ ಹೆಚ್ಚಿನ ಕೋಟ್ಯಧಿಪತಿಗಳಿರುವುದು ಶಿವಸೇನೆ (ಶೇ 82) ನಂತರದ ಸ್ಥಾನಗಳಲ್ಲಿ ಕ್ರಮವಾಗಿಯಲ್ಲಿ  ಡಿಎಂಕೆ (ಶೇ 72) ಕಾಂಗ್ರೆಸ್ (ಶೇ 71) ಬಿಜೆಪಿ (ಶೇ 51), ಬಿಎಸ್‌ಪಿ (ಶೇ 62), ಎಸ್‌ಪಿ (ಶೇ 61) ಬಿಜೆಡಿ (ಶೇ 43), ಸಂಯುಕ್ತ ಜನತಾದಳ (ಶೇ 40) ಮತ್ತು ತೃಣಮೂಲ ಕಾಂಗ್ರೆಸ್ ( ಶೇ 37) ಇವೆ. ಸಿಪಿಎಂನ ಹದಿನಾರು ಸದಸ್ಯರಲ್ಲಿ ಒಬ್ಬರು ಮಾತ್ರ ಕೋಟ್ಯಧಿಪತಿ.

ಇಂತಹ ಸಂಸತ್‌ಗೆ ಅರವತ್ತು ತುಂಬಿದ್ದಕ್ಕಾಗಿ ಸಂಭ್ರಮಪಡೋಣವೇ? ಇದು ನಮ್ಮ ರಾಷ್ಟ್ರ ನಿರ್ಮಾಪಕರು ಕನಸು ಕಂಡಿದ್ದ ಸಂಸತ್ ಖಂಡಿತಾ ಆಗಿರಲಾರದು. ಸಂಸತ್ ಎಂದರೆ ಕೇವಲ ಕಲ್ಲು-ಇಟ್ಟಿಗೆಗಳ ಸ್ಥಾವರ ಅಲ್ಲ. ಅದು ದೇಶದ ಸಾರ್ವಭೌಮತೆಯ ಸಂಕಲ್ಪದ ಪ್ರಾತಿನಿಧಿಕ ಸ್ವರೂಪ. ಚುನಾಯಿತ ಪ್ರತಿನಿಧಿಗಳ ಮೂಲಕ ಜನತೆ ಸಂಸದೀಯ ವ್ಯವಸ್ಥೆಯಲ್ಲಿ ಭಾಗವಹಿಸುವ ಒಂದು ಅನನ್ಯ ವ್ಯವಸ್ಥೆ.

ಹಾಗಿದೆಯೇ  ನಮ್ಮ ಸಂಸತ್? ಹಾಗಿದ್ದಾರೆಯೇ ನಮ್ಮ ಸಂಸದರು? ಕೊಲೆ,ಸುಲಿಗೆ,ಅತ್ಯಾಚಾರದ ಆರೋಪಿಗಳು ಮಾತ್ರವಲ್ಲ, ಸದನದೊಳಗೆ ಮತ ಚಲಾಯಿಸಲು ತಮ್ಮನ್ನು ಮಾರಿಕೊಂಡವರು, ಪ್ರಶ್ನೆ ಕೇಳಲು ದುಡ್ಡು ಪಡೆದವರು, ಕ್ಷೇತ್ರಾಭಿವೃದ್ದಿ ನಿಧಿಯ ಹಣವನ್ನೇ ನುಂಗಿ ಹಾಕಿದವರು, ತಮ್ಮ ಉದ್ಯಮದ ಹಿತಾಸಕ್ತಿ ರಕ್ಷಣೆಗಾಗಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡವರು, ...ಹೀಗೆ `ವರ್ಣರಂಜಿತ ಕಳಂಕಿತರು` ಸಂಸತ್‌ನೊಳಗೆ ವಿರಾಜಮಾನರಾಗಿದ್ದಾರೆ!

 ಇವೆಲ್ಲ ಇತ್ತೀಚಿನ ವಿದ್ಯಮಾನಗಳಲ್ಲ. ಕಳಂಕಿತ ಸದಸ್ಯರ ಸಂಖ್ಯೆ ಮತ್ತು ದುವರ್ತನೆಯ ಪ್ರಮಾಣವಷ್ಟೇ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಾ ಬಂದಿದೆ. ಮೊದಲ ಲೋಕಸಭೆಯಲ್ಲಿಯೇ ಬಾಂಬೆ ಬುಲಿಯನ್ ಅಸೋಸಿಯೇಷನ್ ಪರವಾಗಿ ಸಂಸತ್‌ನಲ್ಲಿ ಪ್ರಚಾರ ನಡೆಸಲು ಸದಸ್ಯ ಎಚ್.ಜಿ.ಮುದಗಲ್ ಅವರು ಆರ್ಥಿಕ ಲಾಭ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಅದರ ತನಿಖೆಗಾಗಿ ಪ್ರಧಾನಿ ಜವಾಹರಲಾಲ್ ನೆಹರೂ ನೇಮಿಸಿದ್ದ ಟಿ.ಟಿ.ಕೃಷ್ಣಮಾಚಾರಿ ನೇತೃತ್ವದ ಸಮಿತಿ ಮುದಗಲ್ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ಕಾರಣ ಮುದಗಲ್ ಅವರನ್ನು ಸದನದಿಂದ ಹೊರಹಾಕಲಾಗಿತ್ತು. ಆ ಸಮಿತಿಯಲ್ಲಿದ್ದ ಸದಸ್ಯೆ ದುರ್ಗಾಬಾಯಿ ಸಂಸತ್ ಸದಸ್ಯರಿಗಾಗಿ ಆಚಾರ ಸಂಹಿತೆಯ ಹನ್ನೆರಡು ಸೂತ್ರಗಳನ್ನು ರಚಿಸಿದ್ದರು.

ನಂತರದ ದಿನಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳ ಅಧ್ಯಕ್ಷರ ಎಪ್ಪತ್ತಾರು ಸಮ್ಮೇಳನಗಳು ನಡೆದಿವೆ. ಅವು ನೂರಾರು ಗೊತ್ತುವಳಿಗಳನ್ನು ಅಂಗೀಕರಿಸಿವೆ. ಸ್ವಾತಂತ್ರ್ಯದ ಸ್ವರ್ಣಮಹೋತ್ಸವದ ಸಂದರ್ಭದಲ್ಲಿ ಕರೆಯಲಾದ ವಿಶೇಷ ಅಧಿವೇಶನ ಸಂಸತ್‌ನ ಘನತೆ ಮತ್ತು ಗೌರವದ ರಕ್ಷಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ನಿರ್ಣಯಗಳನ್ನು ಕೈಗೊಂಡಿತ್ತು.

 2001ರಲ್ಲಿ ಆಗಿನ ಲೋಕಸಭಾಧ್ಯಕ್ಷ ಜಿ.ಎಂ.ಸಿ.ಬಾಲಯೋಗಿ ಅವರ ಅಧ್ಯಕತೆಯಲ್ಲಿ ನಡೆದ ಸಭಾಧ್ಯಕ್ಷರ ಸಮ್ಮೇಳನ ಆಚಾರಸಂಹಿತೆ ರಚನೆಯ ಜತೆಗೆ ಅದರ ಅನುಷ್ಠಾನಕ್ಕೆ ನಿಯಮಾವಳಿಗಳಲ್ಲಿ ತಿದ್ದುಪಡಿ, ಸದಸ್ಯರ ಹಕ್ಕು ಸಮಿತಿಯನ್ನು ಹಕ್ಕು ಮತ್ತು ನೀತಿ ಸಮಿತಿಯಾಗಿ ಪುನರ‌್ರಚನೆ, ಸಂಸದರ ನಡವಳಿಕೆಗಳ ಬಗ್ಗೆ ಮತದಾರರು ನೀಡುವ ದೂರು ಪರಿಶೀಲಿಸಲು ಆ ಸಮಿತಿಗೆ ಅಧಿಕಾರ-ಇವೇ ಮೊದಲಾದ ಗೊತ್ತುವಳಿಗಳನ್ನು ಅಂಗೀಕರಿಸಿತ್ತು.

ಸದನದ `ಬಾವಿ`ಯೊಳಗೆ ನುಗ್ಗಿ `ಪುಂಡಾಟ` ನಡೆಸುವ ಸದಸ್ಯರನ್ನು ಅಮಾನತುಗೊಳಿಸುವುದರಿಂದ ಹಿಡಿದು, ವರ್ಷಕ್ಕೆ ಕನಿಷ್ಠ 100 ದಿನಗಳ ಕಲಾಪ ನಡೆಸುವುದನ್ನು ಕಡ್ಡಾಯಗೊಳಿಸುವವರೆಗೆ ಹಲವಾರು ಸುಧಾರಣಾ ಕ್ರಮಗಳ ಬಗ್ಗೆ ಕಳೆದ 60 ವರ್ಷಗಳಿಂದ ಸದಸ್ಯರು ಚರ್ಚೆ ನಡೆಸಿದ್ದಾರೆ. ಯಾವ ಗೊತ್ತುವಳಿಗಳಾಗಲಿ, ನೀತಿ ಸಂಹಿತೆಯಾಗಲಿ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ.

ಸುಪ್ರೀಂಕೋರ್ಟ್ ಬೆನ್ನುಹತ್ತಿದ್ದ ಕಾರಣಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಅನಿವಾರ್ಯವಾಗಿ ಅಪರಾಧಗಳ ಹಿನ್ನೆಲೆ, ಆಸ್ತಿ ಮತ್ತು ಶಿಕ್ಷಣದ ವಿವರಗಳನ್ನೊಳಗೊಂಡ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ. ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವ ವ್ಯವಸ್ಥೆ ಮಾತ್ರ ಇನ್ನೂ ಬಂದಿಲ್ಲ.

ತಮ್ಮ ಸಂಬಳ-ಭತ್ಯೆ ಏರಿಕೆ ಮಸೂದೆಯ ಬಗ್ಗೆ ಚರ್ಚೆಯನ್ನೇ ನಡೆಸದೆ ಅದಕ್ಕೆ ಕ್ಷಣಾರ್ಧದಲ್ಲಿ ಅಂಗೀಕಾರ ನೀಡಲು ಒಂದಿಷ್ಟೂ ನಾಚಿಕೆ ಪಟ್ಟುಕೊಳ್ಳದ ಸಂಸದರು, ದಾರಿ ತಪ್ಪುತ್ತಿರುವ ಸದಸ್ಯರಿಗೆ ಕಡಿವಾಣ ಹಾಕುವ ಕ್ರಮಗಳಿಗೆ ಕಾನೂನಿನ ರೂಪಕೊಡಲು ಒಪ್ಪುತ್ತಿಲ್ಲ. ಇವೆಲ್ಲವನ್ನೂ `ಸ್ವಯಂ ನಿಯಂತ್ರಣ`ದ ಮೂಲಕವೇ ಸಾಧಿಸಬೇಕು ಎನ್ನುತ್ತಾರೆ ಅವರು.

ಸ್ವಯಂ ನಿಯಂತ್ರಣ ಎಂದರೆ ನಿಯಂತ್ರಣವೇ ಇಲ್ಲ ಎನ್ನುವುದು ಎಲ್ಲ ಕ್ಷೇತ್ರಗಳಲ್ಲಿನ  ಇಲ್ಲಿಯವರೆಗಿನ ಅನುಭವ. ಉಳಿದಿರುವುದು ಒಂದೇ ದಾರಿ ಮತದಾರರಾಗಿರುವ ಜನತೆಯೇ ತಮ್ಮ ಪ್ರತಿನಿಧಿಗಳನ್ನು ನಿಯಂತ್ರಿಸುವುದು. ಈಗಿನ ಚುನಾವಣಾ ವ್ಯವಸ್ಥೆಯಲ್ಲಿ ಇದೂ ಅಸಾಧ್ಯ.

ಸಾಧ್ಯವಾಗಬೇಕಾದರೆ ಜಾತಿ, ದುಡ್ಡು ಮತ್ತು ತೋಳ್ಬಲಗಳ ನಿಯಂತ್ರಣದಿಂದ ಚುನಾವಣಾ ವ್ಯವಸ್ಥೆಯನ್ನು ಬಿಡುಗಡೆಗೊಳಿಸಬೇಕು. ಇದಕ್ಕಾಗಿ ನೆನೆಗುದಿಗೆ ಬಿದ್ದಿರುವ ಚುನಾವಣಾ ಸುಧಾರಣೆಯ ಪ್ರಸ್ತಾವಗಳನ್ನು ಅನುಷ್ಠಾನಕ್ಕೆ ತರಬೇಕು.

ಇದಕ್ಕೆ ಸಂಸದರು ಅವಕಾಶ ಮಾಡಿಕೊಡಬೇಕಲ್ಲ? ಎಂತಹ ವಿಷವರ್ತುಲದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ ನಾವು. ಇದಕ್ಕಾಗಿಯೇ ಇರಬೇಕು, `ಪ್ರಜೆಗಳು ತಮ್ಮ ಅರ್ಹತೆಗೆ ತಕ್ಕ ಸರ್ಕಾರವನ್ನು ಪಡೆಯುತ್ತಾರೆ` ಎನ್ನುವುದು.

No comments:

Post a Comment