Wednesday, May 23, 2012

ಅರವತ್ತು ತುಂಬಿದೆ ಎಂದು ಸಂಭ್ರಮ ಪಡೋಣವೇ? May 21, 2012

ಮೊದಲ cಯಲ್ಲಿ ಶೇ 58ರಷ್ಟಿದ್ದ ಪದವೀಧರ ಸದಸ್ಯರ ಪ್ರಮಾಣ ಈಗ 79ಕ್ಕೆ ಏರಿದೆ.  ಸ್ನಾತಕೋತ್ತರ ಪದವೀಧರ ಸದಸ್ಯರ ಪ್ರಮಾಣ ಶೇ 18ರಿಂದ 29ಕ್ಕೆ ಹೆಚ್ಚಿದೆ ಮತ್ತು ಕೇವಲ ಏಳನೆ ತರಗತಿವರೆಗೆ ಓದಿದ ಸದಸ್ಯರ ಪ್ರಮಾಣ ಶೇ 52ರಿಂದ 9ಕ್ಕೆ ಇಳಿದಿದೆ. ವಯಸ್ಸಾದವರು ಅನುಭವಿಗಳೂ ಹೌದು ಎನ್ನುವುದಾದರೆ ಲೋಕಸಭೆಯಲ್ಲಿ ಅನುಭವಿಗಳ ಸಂಖ್ಯೆ ಹೆಚ್ಚಾಗಿದೆ.

ಮೊದಲ ಲೋಕಸಭೆಯಲ್ಲಿ 56ಕ್ಕಿಂತ ಹೆಚ್ಚು ವಯಸ್ಸಾದವರ ಪ್ರಮಾಣ ಕೇವಲ ಶೇ 26ರಷ್ಟಿದ್ದರೆ, ಈಗ ಅದು ಶೇ 43ಆಗಿದೆ. 70ಕ್ಕಿಂತ ಹೆಚ್ಚು ವಯಸ್ಸಾದವರ ಪ್ರಮಾಣ ಈಗ ಶೇ 7ರಷ್ಟಿದ್ದರೆ ಮೊದಲ ಲೋಕಸಭೆಯಲ್ಲಿ ಈ ವಯಸ್ಸಿನ ಸದಸ್ಯರೇ ಇರಲಿಲ್ಲ.

ಸಂಸತ್ ಸದಸ್ಯರ `ಹುಡುಗಾಟ` ಕೂಡಾ ಕಡಿಮೆಯಾಗಿದೆ. 40ಕ್ಕಿಂತಲೂ ಕಡಿಮೆ ವಯಸ್ಸಿನ ಸದಸ್ಯರ ಸಂಖ್ಯೆ ಶೇ 26ರಿಂದ 14ಕ್ಕೆ ಇಳಿದಿದೆ. ಮಹಿಳಾ ಮೀಸಲಾತಿ ಜಾರಿಗೆ ಬರದೆ ಇದ್ದರೂ ಲೋಕಸಭೆಯಲ್ಲಿ ಮಹಿಳಾ ಸದಸ್ಯರ ಶೇ 5ರಿಂದ 15ಕ್ಕೆ ಏರಿದೆ.

ನಮ್ಮ ಈಗಿನ ಸಂಸದರು ಮಾಡುತ್ತಿರುವುದು `ಬಿಟ್ಟಿ ಚಾಕರಿ` ಅಲ್ಲ. ಎರಡು ವರ್ಷಗಳ ಹಿಂದೆಯಷ್ಟೆ ಸಂಸದರು ತಮ್ಮ ಸಂಬಳ ಮತ್ತು ಭತ್ಯೆಯನ್ನು 300 ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಈಗ ಅವರು ಪ್ರತಿ ತಿಂಗಳು ಮೂಲವೇತನ, ಕ್ಷೇತ್ರ ಭತ್ಯೆ ಮತ್ತು ಕಚೇರಿ ಭತ್ಯೆ ರೂಪದಲ್ಲಿ 1.40 ಲಕ್ಷ ರೂ ಪಡೆಯುತ್ತಿದ್ದಾರೆ. ಇದರ ಜತೆಗೆ ಅಧಿವೇಶನ ನಡೆಯುವ ದಿನಗಳಲ್ಲಿ ದಿನಭತ್ಯೆ 2000 ರೂ ಪಡೆಯುತ್ತಾರೆ.

ವರ್ಷದಲ್ಲಿ 34 ಬಾರಿ ಉಚಿತ ವಿಮಾನ ಪ್ರಯಾಣ, ಪ್ರಥಮದರ್ಜೆ ರೈಲಿನಲ್ಲಿ ಲೆಕ್ಕವಿಲ್ಲದಷ್ಟು ಸಲ ಉಚಿತ ಪ್ರಯಾಣ, ದೆಹಲಿಯಲ್ಲಿ ಉಚಿತ ವಸತಿ, ಉಚಿತ ವಿದ್ಯುತ್,ನೀರು, ದೂರವಾಣಿ ಮತ್ತು ಇಂಟರ್‌ನೆಟ್ ಸೌಲಭ್ಯ ಪಡೆಯುತ್ತಾರೆ.

ಒಂದು ಅಂದಾಜಿನ ಪ್ರಕಾರ ಸಂಸದರ ಮಾಸಿಕ ಸಂಬಳ,ಭತ್ಯೆ ಮತ್ತು ಸೌಲಭ್ಯಗಳ ಒಟ್ಟು ಖರ್ಚು ತಲಾ 5 ಲಕ್ಷ ರೂಪಾಯಿಗಳಷ್ಟಾಗುತ್ತದೆ. ಸಂಸದ ಬಡ ಭಾರತೀಯನ ದುಬಾರಿ ಪ್ರತಿನಿಧಿ!

 ಕಳೆದ 60 ವರ್ಷಗಳಲ್ಲಿ ಸಂಸದರ ಶಿಕ್ಷಣ ಮತ್ತು ಅನುಭವದ ಮಟ್ಟ ಏರಿರುವುದು ಮಾತ್ರವಲ್ಲ ಸಂಬಳ-ಭತ್ಯೆ ಕೂಡಾ ಹೆಚ್ಚಿದೆ. ಹಾಗಿದ್ದರೆ  ಹಿಂದಿಗಿಂತಲೂ ಹೆಚ್ಚು ಶಿಕ್ಷಿತ ಮತ್ತು ಅನುಭವಿಗಳೂ ಆಗಿರುವ, ಆರ್ಥಿಕ ಭದ್ರತೆ ಪಡೆದಿರುವ ಸದಸ್ಯರ ಕಾಣಿಕೆ ಲೋಕಸಭೆಯ ಕಾರ್ಯನಿರ್ವಹಣೆಯಲ್ಲಿ ಪ್ರತಿಫಲನಗೊಳ್ಳಬೇಕಿತ್ತಲ್ಲವೇ? ಅಲ್ಲಿನ ಚಿತ್ರ ಹೀಗಿದೆ:

1950ರಲ್ಲಿ ಲೋಕಸಭೆಯ ಕಲಾಪ 127 ದಿನ ಮತ್ತು ರಾಜ್ಯಸಭೆಯ ಕಲಾಪ 93 ದಿನ ನಡೆದಿದ್ದರೆ 2011ರಲ್ಲಿ ಎರಡೂ ಸದನಗಳ ಕಲಾಪ ತಲಾ 73ದಿನಗಳಿಗೆ ಇಳಿದಿದೆ. ಮೊದಲ ಲೋಕಸಭೆಯ ಅವಧಿಯಲ್ಲಿ ಪ್ರತಿವರ್ಷ ಸರಾಸರಿ 72 ಮಸೂದೆಗಳಿಗೆ ಅಂಗೀಕಾರ ದೊರೆತಿದ್ದರೆ 15ನೇ ಲೋಕಸಭೆಯಲ್ಲಿ ಇದು 40ಕ್ಕೆ ಇಳಿದಿದೆ.

ಕಳೆದ ಚಳಿಗಾಲದ ಅಧಿವೇಶನದವರೆಗೆ 15ನೇ ಲೋಕಸಭೆ, ನಿಗದಿತ ಸಮಯದ ಕೇವಲ ಶೇಕಡಾ 70ರಷ್ಟು ಭಾಗವನ್ನು ಮಾತ್ರ ಬಳಸಿಕೊಂಡಿದೆ. ಇದು ಕಳೆದ 25 ವರ್ಷಗಳ ಅವಧಿಯಲ್ಲಿ ಅತ್ಯಂತ ಕಡಿಮೆ ಅವಧಿ ಕೆಲಸ ಮಾಡಿರುವ ಲೋಕಸಭೆ.

ಯಾಕೆ ಹೀಗಾಗಿದೆ ಎನ್ನುವುದಕ್ಕೆ ಒಂದಷ್ಟು ಮಾಹಿತಿ; ಹದಿನೈದನೆ ಲೋಕಸಭೆಯ 543 ಸದಸ್ಯರು ಚುನಾವಣೆಗೆ ಸ್ವರ್ಧಿಸುವ ಸಂದರ್ಭದಲ್ಲಿ ಸಲ್ಲಿಸಿರುವ ಸ್ವಪರಿಚಯದ ಪ್ರಮಾಣಪತ್ರಗಳ ಅಧ್ಯಯನ ನಡೆಸಿರುವ `ರಾಷ್ಟ್ರೀಯ ಚುನಾವಣಾ ವೀಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಯ ಸಂಘಟನೆ`ಯ ವರದಿಯಲ್ಲಿದೆ.

ಇದರ ಪ್ರಕಾರ ಲೋಕಸಭೆಯಲ್ಲಿರುವ 162 ಸದಸ್ಯರ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳು ವಿಚಾರಣೆಯಲ್ಲಿವೆ. ಇವರಲ್ಲಿ 76 ಸದಸ್ಯರ ವಿರುದ್ಧ ಕೊಲೆ, ಸುಲಿಗೆ, ವಂಚನೆ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪಗಳಿವೆ.

2004ರ ಲೋಕಸಭೆಯಲ್ಲಿ 128 ಸದಸ್ಯರ ವಿರುದ್ಧ ಮಾತ್ರ ಕ್ರಿಮಿನಲ್ ಆರೋಪಗಳಿದ್ದವು. ಕಳೆದ ಲೋಕಸಭೆಗಿಂತ ಕಳಂಕಿತರ ಪ್ರಮಾಣ ಶೇ 24ರಷ್ಟು ಹೆಚ್ಚಾಗಿದೆ.

ಹತ್ತಕ್ಕಿಂತ ಹೆಚ್ಚು ಲೋಕಸಭಾ ಸದಸ್ಯರನ್ನು ಹೊಂದಿರುವ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಕ್ರಿಮಿನಲ್ ಆರೋಪಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದು ಶಿವಸೇನೆ (ಶೇ 82)ಯಲ್ಲಿ.

ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಸಂಯುಕ್ತ ಜನತಾದಳ (ಶೇ 40), ಸಮಾಜವಾದಿ ಜನತಾಪಕ್ಷ (ಶೇ 39) ಬಿಜೆಪಿ (ಶೇ 38),ಬಿಎಸ್‌ಪಿ (ಶೇ 29)ಡಿಎಂಕೆ  (ಶೇ 22) ಕಾಂಗ್ರೆಸ್ (ಶೇ 21) ಮತ್ತು ಸಿಪಿಎಂ (ಶೇ 19) ಇವೆ. ಆರ್‌ಜೆಡಿಯ ನಾಲ್ವರು ಸದಸ್ಯರಲ್ಲಿ ಮೂರು ಮಂದಿ, ಜೆಡಿ (ಎಸ್)ನ ಮೂವರಲ್ಲಿ ಇಬ್ಬರು, ಎಡಿಎಂಕೆಯ ಒಂಬತ್ತರಲ್ಲಿ ನಾಲ್ವರು ಕ್ರಿಮಿನಲ್ ಆರೋಪಿಗಳು.

ಲೋಕಸಭೆಯ ಕಳಂಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿರುವುದು ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳು. ಕ್ರಿಮಿನಲ್ ಆರೋಪದ 163 ಸದಸ್ಯರಲ್ಲಿ 75 ಸದಸ್ಯರು ಈ ಮೂರು ರಾಜ್ಯಗಳಿಗೆ ಸೇರಿದವರು. 28 ಸದಸ್ಯರಲ್ಲಿ ಒಂಬತ್ತು ಮಂದಿ ಕ್ರಿಮಿನಲ್ ಆರೋಪಿಗಳನ್ನು ಹೊಂದಿರುವ ಕರ್ನಾಟಕ ಆರನೇ ಸ್ಥಾನದಲ್ಲಿದೆ.
ಹೀಗಿದ್ದರೂ `ಸಂಸದರು ಕೊಲೆಗಡುಕರು` ಎಂದರೆ ಇವರಿಗೆ ಕೋಪ ಉಕ್ಕಿ ಬರುತ್ತದೆ.
ಭಾರತೀಯರ ವಾರ್ಷಿಕ ತಲಾವಾರು ಆದಾಯ 50,000 ರೂಪಾಯಿ.  ಸಂಸತ್ ಎನ್ನುವುದು ಪ್ರಜೆಗಳ ಪ್ರಾತಿನಿಧಿಕ ಸಂಸ್ಥೆ ಎನ್ನುವುದಾದರೆ ಈ ಬಡಭಾರತವನ್ನೇ ಸಂಸತ್ ಪ್ರತಿನಿಧಿಸಬೇಕಲ್ಲವೇ? ಆದರೆ ನಮ್ಮ ಲೋಕಸಭಾ ಸದಸ್ಯರ ಆಸ್ತಿ ವಿವರವನ್ನು ಗಮನಿಸಿದಾಗ ದೇಶದ ತುಂಬಾ ಕೋಟ್ಯಧಿಪತಿಗಳೇ ತುಂಬಿ ತುಳುಕಾಡುತ್ತಿರಬಹುದೆಂಬ ಅಭಿಪ್ರಾಯ ಮೂಡುತ್ತದೆ.
ಹದಿನೈದನೆ ಲೋಕಸಭೆಯಲ್ಲಿರುವ ಕೋಟ್ಯಧಿಪತಿಗಳ ಸಂಖ್ಯೆ 315. ಸದಸ್ಯರ ಸರಾಸರಿ ವಾರ್ಷಿಕ ಆದಾಯ 5.33 ಕೋಟಿ ರೂ. ಹಿಂದಿನ ಲೋಕಸಭೆಯಲ್ಲಿ ಈ ಸಂಖ್ಯೆ 156 ಮತ್ತು ಸರಾಸರಿ ಆದಾಯ 1.86 ಕೋಟಿ ರೂ ಆಗಿತ್ತು. ಅಂದರೆ ಕೋಟ್ಯಧಿಪತಿಗಳ ಸಂಖ್ಯೆಯಲ್ಲಿ ಶೇ 102ರಷ್ಟು ಮತ್ತು ಸರಾಸರಿ ಆದಾಯದಲ್ಲಿ ಶೇ 186ರಷ್ಟು ಹೆಚ್ಚಳವಾಗಿದೆ.

ಅತಿ ಹೆಚ್ಚಿನ ಕೋಟ್ಯಧಿಪತಿಗಳಿರುವುದು ಶಿವಸೇನೆ (ಶೇ 82) ನಂತರದ ಸ್ಥಾನಗಳಲ್ಲಿ ಕ್ರಮವಾಗಿಯಲ್ಲಿ  ಡಿಎಂಕೆ (ಶೇ 72) ಕಾಂಗ್ರೆಸ್ (ಶೇ 71) ಬಿಜೆಪಿ (ಶೇ 51), ಬಿಎಸ್‌ಪಿ (ಶೇ 62), ಎಸ್‌ಪಿ (ಶೇ 61) ಬಿಜೆಡಿ (ಶೇ 43), ಸಂಯುಕ್ತ ಜನತಾದಳ (ಶೇ 40) ಮತ್ತು ತೃಣಮೂಲ ಕಾಂಗ್ರೆಸ್ ( ಶೇ 37) ಇವೆ. ಸಿಪಿಎಂನ ಹದಿನಾರು ಸದಸ್ಯರಲ್ಲಿ ಒಬ್ಬರು ಮಾತ್ರ ಕೋಟ್ಯಧಿಪತಿ.

ಇಂತಹ ಸಂಸತ್‌ಗೆ ಅರವತ್ತು ತುಂಬಿದ್ದಕ್ಕಾಗಿ ಸಂಭ್ರಮಪಡೋಣವೇ? ಇದು ನಮ್ಮ ರಾಷ್ಟ್ರ ನಿರ್ಮಾಪಕರು ಕನಸು ಕಂಡಿದ್ದ ಸಂಸತ್ ಖಂಡಿತಾ ಆಗಿರಲಾರದು. ಸಂಸತ್ ಎಂದರೆ ಕೇವಲ ಕಲ್ಲು-ಇಟ್ಟಿಗೆಗಳ ಸ್ಥಾವರ ಅಲ್ಲ. ಅದು ದೇಶದ ಸಾರ್ವಭೌಮತೆಯ ಸಂಕಲ್ಪದ ಪ್ರಾತಿನಿಧಿಕ ಸ್ವರೂಪ. ಚುನಾಯಿತ ಪ್ರತಿನಿಧಿಗಳ ಮೂಲಕ ಜನತೆ ಸಂಸದೀಯ ವ್ಯವಸ್ಥೆಯಲ್ಲಿ ಭಾಗವಹಿಸುವ ಒಂದು ಅನನ್ಯ ವ್ಯವಸ್ಥೆ.

ಹಾಗಿದೆಯೇ  ನಮ್ಮ ಸಂಸತ್? ಹಾಗಿದ್ದಾರೆಯೇ ನಮ್ಮ ಸಂಸದರು? ಕೊಲೆ,ಸುಲಿಗೆ,ಅತ್ಯಾಚಾರದ ಆರೋಪಿಗಳು ಮಾತ್ರವಲ್ಲ, ಸದನದೊಳಗೆ ಮತ ಚಲಾಯಿಸಲು ತಮ್ಮನ್ನು ಮಾರಿಕೊಂಡವರು, ಪ್ರಶ್ನೆ ಕೇಳಲು ದುಡ್ಡು ಪಡೆದವರು, ಕ್ಷೇತ್ರಾಭಿವೃದ್ದಿ ನಿಧಿಯ ಹಣವನ್ನೇ ನುಂಗಿ ಹಾಕಿದವರು, ತಮ್ಮ ಉದ್ಯಮದ ಹಿತಾಸಕ್ತಿ ರಕ್ಷಣೆಗಾಗಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡವರು, ...ಹೀಗೆ `ವರ್ಣರಂಜಿತ ಕಳಂಕಿತರು` ಸಂಸತ್‌ನೊಳಗೆ ವಿರಾಜಮಾನರಾಗಿದ್ದಾರೆ!

 ಇವೆಲ್ಲ ಇತ್ತೀಚಿನ ವಿದ್ಯಮಾನಗಳಲ್ಲ. ಕಳಂಕಿತ ಸದಸ್ಯರ ಸಂಖ್ಯೆ ಮತ್ತು ದುವರ್ತನೆಯ ಪ್ರಮಾಣವಷ್ಟೇ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಾ ಬಂದಿದೆ. ಮೊದಲ ಲೋಕಸಭೆಯಲ್ಲಿಯೇ ಬಾಂಬೆ ಬುಲಿಯನ್ ಅಸೋಸಿಯೇಷನ್ ಪರವಾಗಿ ಸಂಸತ್‌ನಲ್ಲಿ ಪ್ರಚಾರ ನಡೆಸಲು ಸದಸ್ಯ ಎಚ್.ಜಿ.ಮುದಗಲ್ ಅವರು ಆರ್ಥಿಕ ಲಾಭ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಅದರ ತನಿಖೆಗಾಗಿ ಪ್ರಧಾನಿ ಜವಾಹರಲಾಲ್ ನೆಹರೂ ನೇಮಿಸಿದ್ದ ಟಿ.ಟಿ.ಕೃಷ್ಣಮಾಚಾರಿ ನೇತೃತ್ವದ ಸಮಿತಿ ಮುದಗಲ್ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ಕಾರಣ ಮುದಗಲ್ ಅವರನ್ನು ಸದನದಿಂದ ಹೊರಹಾಕಲಾಗಿತ್ತು. ಆ ಸಮಿತಿಯಲ್ಲಿದ್ದ ಸದಸ್ಯೆ ದುರ್ಗಾಬಾಯಿ ಸಂಸತ್ ಸದಸ್ಯರಿಗಾಗಿ ಆಚಾರ ಸಂಹಿತೆಯ ಹನ್ನೆರಡು ಸೂತ್ರಗಳನ್ನು ರಚಿಸಿದ್ದರು.

ನಂತರದ ದಿನಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳ ಅಧ್ಯಕ್ಷರ ಎಪ್ಪತ್ತಾರು ಸಮ್ಮೇಳನಗಳು ನಡೆದಿವೆ. ಅವು ನೂರಾರು ಗೊತ್ತುವಳಿಗಳನ್ನು ಅಂಗೀಕರಿಸಿವೆ. ಸ್ವಾತಂತ್ರ್ಯದ ಸ್ವರ್ಣಮಹೋತ್ಸವದ ಸಂದರ್ಭದಲ್ಲಿ ಕರೆಯಲಾದ ವಿಶೇಷ ಅಧಿವೇಶನ ಸಂಸತ್‌ನ ಘನತೆ ಮತ್ತು ಗೌರವದ ರಕ್ಷಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ನಿರ್ಣಯಗಳನ್ನು ಕೈಗೊಂಡಿತ್ತು.

 2001ರಲ್ಲಿ ಆಗಿನ ಲೋಕಸಭಾಧ್ಯಕ್ಷ ಜಿ.ಎಂ.ಸಿ.ಬಾಲಯೋಗಿ ಅವರ ಅಧ್ಯಕತೆಯಲ್ಲಿ ನಡೆದ ಸಭಾಧ್ಯಕ್ಷರ ಸಮ್ಮೇಳನ ಆಚಾರಸಂಹಿತೆ ರಚನೆಯ ಜತೆಗೆ ಅದರ ಅನುಷ್ಠಾನಕ್ಕೆ ನಿಯಮಾವಳಿಗಳಲ್ಲಿ ತಿದ್ದುಪಡಿ, ಸದಸ್ಯರ ಹಕ್ಕು ಸಮಿತಿಯನ್ನು ಹಕ್ಕು ಮತ್ತು ನೀತಿ ಸಮಿತಿಯಾಗಿ ಪುನರ‌್ರಚನೆ, ಸಂಸದರ ನಡವಳಿಕೆಗಳ ಬಗ್ಗೆ ಮತದಾರರು ನೀಡುವ ದೂರು ಪರಿಶೀಲಿಸಲು ಆ ಸಮಿತಿಗೆ ಅಧಿಕಾರ-ಇವೇ ಮೊದಲಾದ ಗೊತ್ತುವಳಿಗಳನ್ನು ಅಂಗೀಕರಿಸಿತ್ತು.

ಸದನದ `ಬಾವಿ`ಯೊಳಗೆ ನುಗ್ಗಿ `ಪುಂಡಾಟ` ನಡೆಸುವ ಸದಸ್ಯರನ್ನು ಅಮಾನತುಗೊಳಿಸುವುದರಿಂದ ಹಿಡಿದು, ವರ್ಷಕ್ಕೆ ಕನಿಷ್ಠ 100 ದಿನಗಳ ಕಲಾಪ ನಡೆಸುವುದನ್ನು ಕಡ್ಡಾಯಗೊಳಿಸುವವರೆಗೆ ಹಲವಾರು ಸುಧಾರಣಾ ಕ್ರಮಗಳ ಬಗ್ಗೆ ಕಳೆದ 60 ವರ್ಷಗಳಿಂದ ಸದಸ್ಯರು ಚರ್ಚೆ ನಡೆಸಿದ್ದಾರೆ. ಯಾವ ಗೊತ್ತುವಳಿಗಳಾಗಲಿ, ನೀತಿ ಸಂಹಿತೆಯಾಗಲಿ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ.

ಸುಪ್ರೀಂಕೋರ್ಟ್ ಬೆನ್ನುಹತ್ತಿದ್ದ ಕಾರಣಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಅನಿವಾರ್ಯವಾಗಿ ಅಪರಾಧಗಳ ಹಿನ್ನೆಲೆ, ಆಸ್ತಿ ಮತ್ತು ಶಿಕ್ಷಣದ ವಿವರಗಳನ್ನೊಳಗೊಂಡ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ. ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವ ವ್ಯವಸ್ಥೆ ಮಾತ್ರ ಇನ್ನೂ ಬಂದಿಲ್ಲ.

ತಮ್ಮ ಸಂಬಳ-ಭತ್ಯೆ ಏರಿಕೆ ಮಸೂದೆಯ ಬಗ್ಗೆ ಚರ್ಚೆಯನ್ನೇ ನಡೆಸದೆ ಅದಕ್ಕೆ ಕ್ಷಣಾರ್ಧದಲ್ಲಿ ಅಂಗೀಕಾರ ನೀಡಲು ಒಂದಿಷ್ಟೂ ನಾಚಿಕೆ ಪಟ್ಟುಕೊಳ್ಳದ ಸಂಸದರು, ದಾರಿ ತಪ್ಪುತ್ತಿರುವ ಸದಸ್ಯರಿಗೆ ಕಡಿವಾಣ ಹಾಕುವ ಕ್ರಮಗಳಿಗೆ ಕಾನೂನಿನ ರೂಪಕೊಡಲು ಒಪ್ಪುತ್ತಿಲ್ಲ. ಇವೆಲ್ಲವನ್ನೂ `ಸ್ವಯಂ ನಿಯಂತ್ರಣ`ದ ಮೂಲಕವೇ ಸಾಧಿಸಬೇಕು ಎನ್ನುತ್ತಾರೆ ಅವರು.

ಸ್ವಯಂ ನಿಯಂತ್ರಣ ಎಂದರೆ ನಿಯಂತ್ರಣವೇ ಇಲ್ಲ ಎನ್ನುವುದು ಎಲ್ಲ ಕ್ಷೇತ್ರಗಳಲ್ಲಿನ  ಇಲ್ಲಿಯವರೆಗಿನ ಅನುಭವ. ಉಳಿದಿರುವುದು ಒಂದೇ ದಾರಿ ಮತದಾರರಾಗಿರುವ ಜನತೆಯೇ ತಮ್ಮ ಪ್ರತಿನಿಧಿಗಳನ್ನು ನಿಯಂತ್ರಿಸುವುದು. ಈಗಿನ ಚುನಾವಣಾ ವ್ಯವಸ್ಥೆಯಲ್ಲಿ ಇದೂ ಅಸಾಧ್ಯ.

ಸಾಧ್ಯವಾಗಬೇಕಾದರೆ ಜಾತಿ, ದುಡ್ಡು ಮತ್ತು ತೋಳ್ಬಲಗಳ ನಿಯಂತ್ರಣದಿಂದ ಚುನಾವಣಾ ವ್ಯವಸ್ಥೆಯನ್ನು ಬಿಡುಗಡೆಗೊಳಿಸಬೇಕು. ಇದಕ್ಕಾಗಿ ನೆನೆಗುದಿಗೆ ಬಿದ್ದಿರುವ ಚುನಾವಣಾ ಸುಧಾರಣೆಯ ಪ್ರಸ್ತಾವಗಳನ್ನು ಅನುಷ್ಠಾನಕ್ಕೆ ತರಬೇಕು.

ಇದಕ್ಕೆ ಸಂಸದರು ಅವಕಾಶ ಮಾಡಿಕೊಡಬೇಕಲ್ಲ? ಎಂತಹ ವಿಷವರ್ತುಲದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ ನಾವು. ಇದಕ್ಕಾಗಿಯೇ ಇರಬೇಕು, `ಪ್ರಜೆಗಳು ತಮ್ಮ ಅರ್ಹತೆಗೆ ತಕ್ಕ ಸರ್ಕಾರವನ್ನು ಪಡೆಯುತ್ತಾರೆ` ಎನ್ನುವುದು.

ಬಿಜೆಪಿ ಗಂಟಲಿನೊಳಗಿನ ಬಿಸಿತುಪ್ಪ ಯಡಿಯೂರಪ್ಪ, ದಿನೇಶ್ ಅಮೀನ್ ಮಟ್ಟು May 14, 2012

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಸುತ್ತಿಕೊಂಡಿರುವ ಜೋತಿಷಿಗಳು ಮತ್ತು ಅವರು ಅಡ್ಡಬೀಳುತ್ತಿರುವ ದೇವರುಗಳ ಮನಸ್ಸಲೇನಿದೆ ಎಂದು ಗೊತ್ತಿಲ್ಲ, ಆದರೆ ಎದುರಾಗಿರುವ ಪ್ರತಿಕೂಲ ಪರಿಸ್ಥಿತಿಯ ಹೊರತಾಗಿಯೂ, ಹೋರಾಟದ ಮೂಲಕ `ಬೂದಿಯಿಂದ ಎದ್ದು ಬರುತ್ತೇನೆ` ಎಂಬ ಛಲವನ್ನು ಯಡಿಯೂರಪ್ಪನವರು ಇಟ್ಟುಕೊಂಡಿದ್ದರೆ ಅದಕ್ಕೆ ಭಾರತೀಯ ಜನತಾ ಪಕ್ಷದಲ್ಲಿ ಅವಕಾಶ ಸಿಗುವುದು ಕಷ್ಟ. ಆ ಪಕ್ಷದಲ್ಲಿ ಅವರಿಗೆ ರಾಜಕೀಯ ಭವಿಷ್ಯ ಇಲ್ಲ.

ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಯಡಿಯೂರಪ್ಪನವರು ತಮ್ಮ ದಾರಿ ನೋಡಿಕೊಳ್ಳಬೇಕಾಗಬಹುದು, ಅದು ಕೂಡಾ ಹೂ ಚೆಲ್ಲಿದ ಹಾದಿ ಅಲ್ಲ, ಅಲ್ಲಿಯೂ ಕಲ್ಲು-ಮುಳ್ಳು, ಹೊಂಡ-ಖೆಡ್ಡಾಗಳಿವೆ. ಯಡಿಯೂರಪ್ಪನವರ ರಾಜಕೀಯ ಪಯಣ ನಿಜಕ್ಕೂ ಕಷ್ಟದಲ್ಲಿದೆ.

ಸಿಬಿಐ ತನಿಖೆ ಪ್ರಾರಂಭವಾದ ಕೂಡಲೇ ರಾಜಕಾರಣಿಯೊಬ್ಬನ ಭವಿಷ್ಯ ಅಂತ್ಯಗೊಳ್ಳಬೇಕಾಗಿಲ್ಲ. ಸೆರೆಮನೆವಾಸ ಮಾಡಿಬಂದ ನಂತರವೂ ಚುನಾವಣೆಯಲ್ಲಿ ಗೆದ್ದು ಮೊದಲಿನ (ಮುಖ್ಯಮಂತ್ರಿಯಾಗಿ ಮಾಡಿದ್ದ) `ಪಾಪ`ಗಳನ್ನು ತೊಳೆಯುವ ರೀತಿಯಲ್ಲಿ ದಕ್ಷತೆಯಿಂದ ರೈಲು ಸಚಿವರಾಗಿ ಹೆಸರು ಮಾಡಿದ ಲಾಲುಪ್ರಸಾದ್ ನಮ್ಮ ಕಣ್ಣಮುಂದೆ ಇದ್ದಾರೆ. ಬಿಹಾರದ ರಾಜಕೀಯದಲ್ಲಿ ಅವರ ಆಟ ಮುಗಿದಿದೆ ಎಂದು ಹೇಳುವ ಹಾಗಿಲ್ಲ. ಜೈಲುವಾಸದ ಹೊರತಾಗಿಯೂ ಕುಮಾರಿ  ಜಯಲಲಿತಾ ಮತ್ತೆ ತಮಿಳುನಾಡಿನ ಮುಖ್ಯಮಂತ್ರಿಯಾಗಲಿಲ್ಲವೇ? ಜೈಲಿನಲ್ಲಿದ್ದುಕೊಂಡೇ ಚುನಾವಣೆಯಲ್ಲಿ ಗೆದ್ದಿರುವ ಕೊಲೆ-ಸುಲಿಗೆಯ ಆರೋಪಿಗಳಿಲ್ಲವೇ? ನೂರೆಂಟು ಹೀನ ಅಪರಾಧಗಳ ಆರೋಪಗಳನ್ನು ತಲೆಮೇಲೆ ಹೊತ್ತಿದ್ದರೂ, ಎಲ್ಲಿಯವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕಾನೂನಿನಲ್ಲಿ ಇರುತ್ತದೋ, ಎಲ್ಲಿಯವರೆಗೆ ಅಂಥವರನ್ನು ಬೇರೆ ಬೇರೆ ಕಾರಣಗಳಿಗಾಗಿ (ಜಾತಿ,ದುಡ್ಡು, ತೋಳ್ಬಲ) ಆಯ್ಕೆಮಾಡುವ ಮೂರ್ಖ, ಭ್ರಷ್ಟ, ಅಸಹಾಯಕ ಮತದಾರರು ಇರುತ್ತಾರೋ ಅಲ್ಲಿಯವರೆಗೆ ಯಾವ ಪಾಪಿ ರಾಜಕಾರಣಿಯ ಭವಿಷ್ಯವೂ ಕೊನೆಗೊಳ್ಳುವುದಿಲ್ಲ.

ಬೇರೆಬೇರೆ ಕಾರಣಗಳಿಗಾಗಿ ಕಳಂಕಿತರಾದ ನಾಯಕರ ಪಟ್ಟಿ ನೋಡಿದರೆ `ಪಾಪ ಸುಟ್ಟುಹಾಕಿದ ಬೂದಿ`ಯಿಂದ ಎದ್ದು ಬಂದವರಲ್ಲಿ ಹೆಚ್ಚಿನವರು ಪ್ರಾದೇಶಿಕ ಪಕ್ಷಗಳ ನಾಯಕರು ಎನ್ನುವುದು ಸ್ಪಷ್ಟವಾಗುತ್ತದೆ. ರಾಷ್ಟ್ರೀಯ ಪಕ್ಷಗಳಲ್ಲಿ ಇಂತಹವರಿಗೆ ಅವಕಾಶ ಕಡಿಮೆ. ರಾಜಕೀಯವಾಗಿ ತಮಗೆ ಹೊರೆ ಎಂದು ಅನಿಸಿದ ಕೂಡಲೇ ರಾಷ್ಟ್ರೀಯ ಪಕ್ಷಗಳು ಇಂತಹವರನ್ನು ಮರುಯೋಚನೆ ಮಾಡದೆ ಹೊರಗೆತ್ತಿ ಎಸೆದುಬಿಡುತ್ತವೆ. ಆರೋಪಗಳಿಂದ ಖುಲಾಸೆ ಹೊಂದಿದ ಬಳಿಕ ಪಕ್ಷ ಇಲ್ಲವೇ ಸರ್ಕಾರದಲ್ಲಿ ಸಣ್ಣಪುಟ್ಟ ಹುದ್ದೆಗಳಿಗಷ್ಟೆ ಅವರು ತೃಪ್ತರಾಗಬೇಕು. ಉದಾಹರಣೆಗೆ ಮುಂದೊಂದು ದಿನ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಬೇಕೆಂದುಕೊಂಡಿದ್ದ ಸುರೇಶ್ ಕಲ್ಮಾಡಿ ಕನಸು ನನಸಾಗುವುದು ಕಷ್ಟ. ಬಂಗಾರು ಲಕ್ಷ್ಮಣ್ ಅವರ ರಾಜಕೀಯ ಕೊನೆಗೊಂಡು ಆಗಲೇ ಹತ್ತುವರ್ಷಗಳಾಗಿ ಹೋಯಿತು. ಇದರ ಅರ್ಥ ರಾಷ್ಟ್ರೀಯ ಪಕ್ಷಗಳು ಬಹಳ ಪ್ರಾಮಾಣಿಕವಾದ, ಮೌಲ್ಯಾಧಾರಿತ ರಾಜಕಾರಣಕ್ಕೆ ಬದ್ದವಾಗಿವೆ ಎಂದಲ್ಲ. ಅದು ರಾಷ್ಟ್ರರಾಜಕಾರಣದ ಅನಿವಾರ್ಯತೆ ಅಷ್ಟೆ. ಇದೇ ಮಾತನ್ನು ಲಾಲುಪ್ರಸಾದ್, ಮಧು ಕೋಡಾ, ಕನಿಮೋಳಿ ಮೊದಲಾದ ಪ್ರಾದೇಶಿಕ ಪಕ್ಷಗಳ ನಾಯಕರ ಬಗ್ಗೆ ಹೇಳಲಾಗದು. ಇದಕ್ಕಾಗಿಯೇ ಭ್ರಷ್ಟರು ತಾವೇ ಹೈಕಮಾಂಡ್ ಆಗಿರುವ ಪ್ರತ್ಯೇಕ ಪಕ್ಷವೊಂದನ್ನು ಕಟ್ಟಿಕೊಂಡು ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಂಡು ಹೋಗಲು ಪ್ರಯತ್ನಿಸುತ್ತಾರೆ.

ಈ ಹಿನ್ನೆಲೆಯಿಂದ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಭವಿಷ್ಯವನ್ನು ನೋಡಬೇಕಾಗುತ್ತದೆ. ಭಾರತೀಯ ಜನತಾ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯುಪಿಎ ವಿರುದ್ದ  ಭ್ರಷ್ಟಾಚಾರವನ್ನು ಮುಖ್ಯ ಅಸ್ತ್ರವಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿದೆ. ಯುಪಿಎ ಸರ್ಕಾರದ 2ಜಿ ಸ್ಪೆಕ್ಟ್ರಂ, ಕಾಮನ್‌ವೆಲ್ತ್ ಗೇಮ್ಸ, ಆದರ್ಶ ಹೌಸಿಂಗ್ ಸೊಸೈಟಿ ಮೊದಲಾದ ಬಹುಕೋಟಿ ಹಗರಣಗಳನ್ನು ಸಂಸತ್‌ನ ಒಳಗೆ ಮತ್ತು ಹೊರಗೆ ಮತ್ತೆಮತ್ತೆ ಕೆದಕಿ ಜೀವಂತವಾಗಿಡಲು ಪ್ರಯತ್ನಿಸುತ್ತಿರುವುದು ಇದೇ ಕಾರಣಕ್ಕೆ. ಆದರೆ  ಬಿಜೆಪಿಯಿಂದ ತೂರಿಬರುತ್ತಿರುವ ಭ್ರಷ್ಟಾಚಾರ ವಿರೋಧಿ ಬಾಣಗಳನ್ನು ಕಾಂಗ್ರೆಸ್ ಪಕ್ಷ ಕರ್ನಾಟಕದ ಭ್ರಷ್ಟ ಸರ್ಕಾರದ ಗುರಾಣಿಯನ್ನು ಮುಂದೊಡ್ಡಿ ಮುರಿದುಹಾಕುತ್ತಿದೆ. ಯಡಿಯೂರಪ್ಪನವರನ್ನು ಬಗಲಲ್ಲಿ ಕಟ್ಟಿಕೊಂಡು ಭ್ರಷ್ಟಾಚಾರ ವಿರೋಧಿ ರಾಜಕೀಯ ಹೋರಾಟವನ್ನು ಬಿಜೆಪಿ ಮುಂದುವರಿಸಿಕೊಂಡು ಹೋಗಲು ಸಾಧ್ಯವಾಗಲಾರದು. ರಾಜಸ್ತಾನದಲ್ಲಿ ವಸುಂಧರ ರಾಜೇ ಅವರ ಬಂಡಾಯದ ಭೀತಿ, ಬಾಬರಿ ಮಸೀದಿ ಧ್ವಂಸದ ಪ್ರಕರಣದಲ್ಲಿ ಮತ್ತೆ ಎಲ್.ಕೆ.ಅಡ್ವಾಣಿ ವಿರುದ್ದ ತನಿಖೆ ಪುನರಾರಂಭಿಸಲು ಸಿಬಿಐ ತೋರಿಸುತ್ತಿರುವ ಆಸಕ್ತಿ, ಪಕ್ಷದ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಲಂಚ ಹಗರಣದಲ್ಲಿ ಜೈಲಿಗೆ ಹೋಗಿರುವಂತಹ ಮುಜುಗರದ ಪರಿಸ್ಥಿತಿ-ಇವೆಲ್ಲವೂ ಬಿಜೆಪಿಯನ್ನು ನಿತ್ರಾಣಗೊಳಿಸಿದೆ.
ಇಂತಹ ಸ್ಥಿತಿಯಲ್ಲಿ ಭ್ರಷ್ಟನಾಯಕನೊಬ್ಬನನ್ನು ತಲೆಮೇಲೆ ಕೂರಿಸಿಕೊಂಡು ಮುನ್ನಡೆಯುವಷ್ಟು ತ್ರಾಣ ಆ ಪಕ್ಷಕ್ಕೂ ಇದ್ದ ಹಾಗಿಲ್ಲ.  ತನ್ನ ಸುತ್ತ ಸೃಷ್ಟಿಸಿಕೊಂಡಿರುವ ಹುಸಿ ನೈತಿಕತೆಯ ಪ್ರಭಾವಳಿ ಯಡಿಯೂರಪ್ಪನವರಿಂದಾಗಿ ಮಂಕಾಗಿ ಹೋಗುತ್ತಿರುವುದು ಸಂಘ ಪರಿವಾರಕ್ಕೂ ಇರುಸುಮುರುಸು ಉಂಟುಮಾಡುತ್ತಿದೆ. ಆದ್ದರಿಂದ ಪಕ್ಷ ಮತ್ತು ಪರಿವಾರ ಎರಡಕ್ಕೂ ಯಡಿಯೂರಪ್ಪ ಗಂಟಲಲ್ಲಿರುವ ಬಿಸಿತುಪ್ಪ.

ಯಡಿಯೂರಪ್ಪ ವಿರುದ್ಧದ ಸಿಬಿಐ ತನಿಖೆ ಐದಾರು ತಿಂಗಳಲ್ಲಿ ಮುಗಿದುಹೋಗುವಂತಹದ್ದಲ್ಲ, ಹಾಗೆ ಮುಗಿದುಹೋಗಲು ಕೇಂದ್ರ ಸರ್ಕಾರ ಬಿಡಲಾರದು. ಇದನ್ನು ಮುಂದಿನ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯವರೆಗೂ ಎಳೆದುಕೊಂಡು ಹೋಗಲು ಅಧಿಕಾರವನ್ನು ಉಪಯೋಗಿಸಿಕೊಂಡೋ, ದುರುಪಯೋಗಮಾಡಿಕೊಂಡೋ ಕಾಂಗ್ರೆಸ್ ಖಂಡಿತ ಪ್ರಯತ್ನಿಸಲಿದೆ. ಬಂಗಾರು ಲಕ್ಷ್ಮಣ್ ಅವರಂತೆ ಯಡಿಯೂರಪ್ಪನವರು ತಮ್ಮ ಪಾಡಿಗೆ ಮೂಲೆಯಲ್ಲಿದ್ದು ಬಿಟ್ಟರೆ ಸಮಸ್ಯೆ ಇಲ್ಲ. ಹಾಗೆ ಇರುವುದು ಅವರ ಜಾಯಮಾನ ಅಲ್ಲ.

ಮುಖ್ಯಮಂತ್ರಿ ಇಲ್ಲವೇ ಪಕ್ಷದ ಅಧ್ಯಕ್ಷ ಯಾರೇ ಆಗಲಿ, ಪ್ರಮುಖ ನಿರ್ಧಾರಗಳು ಮಾತ್ರ ತಮ್ಮ ಮನೆಯ ಉಪಹಾರದ ಮೇಜಿನಲ್ಲಿಯೇ ನಡೆಯಬೇಕು ಎಂಬ ಹಟಮಾರಿತನವನ್ನು ಹೊಂದಿರುವವರು ಯಡಿಯೂರಪ್ಪ. ಪಕ್ಷ ಮತ್ತು ಸರ್ಕಾರದ ಅತ್ಯುನ್ನತ ಹುದ್ದೆಗಳನ್ನು ಏರುವುದು ಸಾಧ್ಯ ಇಲ್ಲ ಎಂದಾದರೆ ಅಲ್ಲಿ ತಮ್ಮ ಕೈಗೊಂಬೆಗಳು ಇರಬೇಕು ಎಂದು ಬಯಸುತ್ತಾರೆ ಯಡಿಯೂರಪ್ಪ. ಬಿಜೆಪಿ ಇದನ್ನು ಒಪ್ಪಿಕೊಳ್ಳಬಹುದೇ?

ಬಿಜೆಪಿ ಮುಂದೆ ಇರುವ ಇನ್ನೊಂದು ದಾರಿ ಯಡಿಯೂರಪ್ಪನವರನ್ನು ಒಂದೋ ಪಕ್ಷದಿಂದ ಉಚ್ಚಾಟಿಸುವುದು ಇಲ್ಲವೇ ಅವರ ಯಾವ ಬೇಡಿಕೆಗಳನ್ನೂ ಈಡೇರಿಸಲು ಹೋಗದೆ ಅವರಾಗಿಯೇ ಪಕ್ಷ ಬಿಟ್ಟು ಹೋಗುವಂತೆ ಮಾಡುವುದು. ಅಲ್ಲಿಯೂ ಅಪಾಯ ಇದೆ. ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರು ತಮ್ಮ ನಡೆ-ನುಡಿ ಮತ್ತು ಅಧಿಕಾರದ ಮೂಲಕ ತಮ್ಮನ್ನು ಲಿಂಗಾಯತ ನಾಯಕರಾಗಿ ಬಿಂಬಿಸಿಕೊಳ್ಳುವುದರಲ್ಲಿ  ಯಶಸ್ವಿಯಾಗಿದ್ದಾರೆ. ಜಾತಿ ಕಾರಣಕ್ಕಾಗಿ ಬೆಂಬಲ ನೀಡುವ ಮತದಾರರು ತಮ್ಮ ಆಯ್ಕೆಯ ನಾಯಕನ ವಿರುದ್ದದ ಆರೋಪಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ ಎನ್ನುವುದು ಚುನಾವಣೆಯ ಇತಿಹಾಸವನ್ನು ನೋಡಿದರೆ ಮನವರಿಕೆಯಾಗುತ್ತದೆ. ಉಚ್ಚಾಟನೆ ಇಲ್ಲವೇ ಬಂಡಾಯದ ಮೂಲಕ ಪಕ್ಷ ಬಿಟ್ಟು ಹೋದವರಿಗೆ ಗೆಲ್ಲುವ ಸಾಮರ್ಥ್ಯ ಇರದೆ ಇದ್ದರೂ ತಾವು ಹಿಂದೆ ಇದ್ದ ಪಕ್ಷವನ್ನು ಸೋಲಿಸುವ ಶಕ್ತಿ ಇರುತ್ತದೆ. ಯಡಿಯೂರಪ್ಪನವರ ವಿಷಯದಲ್ಲಿಯೂ ಇದು ಸತ್ಯ.  ಅವರು ಪಕ್ಷ ಬಿಟ್ಟುಹೋಗಿ ಸ್ವಂತ ಬಲದಿಂದ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಿ ಗೆದ್ದು ಬಂದು ಮುಖ್ಯಮಂತ್ರಿಯಾಗಲಾರರು, ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ಮಾಡಬಲ್ಲರು.

ಯಡಿಯೂರಪ್ಪನವರ ಭವಿಷ್ಯದ ಹಾದಿ ಕೂಡಾ ನಿರಾತಂಕವಾಗಿಲ್ಲ. ಪಕ್ಷದಲ್ಲಿಯೇ ಉಳಿದು ಒಂದಷ್ಟು ದಿನ ಬಾಯಿಮುಚ್ಚಿಕೊಂಡು ನ್ಯಾಯಾಂಗದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅವರ ಮುಂದಿನ ಒಂದು ಹಾದಿ. ಇದು ವೈಯಕ್ತಿಕವಾಗಿ ಸುರಕ್ಷಿತ ಹಾದಿ. ಇದರಲ್ಲಿ ಬಹಳ ಅಪಾಯಗಳು ಕಡಿಮೆ. ಆದರೆ ಯಡಿಯೂರಪ್ಪ ಆ ರೀತಿ ತೆಪ್ಪಗೆ ಕೂರುವವರಲ್ಲ. ಆಡಳಿತ ಪಕ್ಷದಲ್ಲಿದ್ದರೂ ಅವರು ವಿರೋಧ ಪಕ್ಷದ ನಾಯಕರಂತೆ ಗದ್ದಲ ಉಂಟು ಮಾಡುತ್ತಿದ್ದವರು. ಅವರು ಸುಮ್ಮನಿದ್ದರೂ ಅವರ ಸುತ್ತಮುತ್ತ ಇರುವ ಬೆಂಬಲಿಗರು ಸುಮ್ಮನಿರಲು ಬಿಡಲಾರರು.

ಅಂತಹ ಸಂದರ್ಭದಲ್ಲಿ ಅವರ ಮುಂದೆ ಇರುವ ಇನ್ನೊಂದು ದಾರಿ ಈಗಿನ ಪಕ್ಷ ತ್ಯಜಿಸಿ ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯವಾಗಿ ಸಕ್ರಿಯವಾಗಿ ಇರುವುದು. ಇದರಲ್ಲಿ ಅಪಾಯಗಳು ಹೆಚ್ಚು. ಮೊದಲನೆಯದಾಗಿ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳು ಎಂದೂ ಯಶಸ್ಸು ಕಂಡಿಲ್ಲ. ಇದಕ್ಕೆ ಯಡಿಯೂರಪ್ಪನವರ ಜಿಲ್ಲೆಯವರೇ ಆಗಿದ್ದ ಎಸ್.ಬಂಗಾರಪ್ಪನವರ ರಾಜಕೀಯ ಜೀವನವೇ ಉತ್ತಮ ನಿದರ್ಶನ. ಕಾಂಗ್ರೆಸ್ ಪಕ್ಷದ ವಿರುದ್ಧ ಅವರು ಬಂಡೆದ್ದು ಸ್ಥಾಪಿಸಿದ್ದ ಕರ್ನಾಟಕ ಕಾಂಗ್ರೆಸ್ ಪಕ್ಷ ಶೇ 7.5ರಷ್ಟು ಮತ ಮತ್ತು ಹತ್ತು ಶಾಸಕರನ್ನು ಗಳಿಸಲಷ್ಟೇ ಸಾಧ್ಯವಾಗಿತ್ತು. ಚುನಾವಣೆಯ ನಂತರ ಆ ಶಾಸಕರು ಕೂಡಾ ಬಂಗಾರಪ್ಪನವರ ಜತೆ ಉಳಿಯಲಿಲ್ಲ. ಬಂಗಾರಪ್ಪನವರಿಗೆ ಇಲ್ಲದ ಜಾತಿ ಬೆಂಬಲದ ಯಡಿಯೂರಪ್ಪನವರಿಗೆ ಇದೆ ಎನ್ನುವುದರಲ್ಲಿ ಅನುಮಾನ ಇಲ್ಲ. ಇದೇ ಜಾತಿ ಬಲದಿಂದ ದಕ್ಷಿಣ ಕರ್ನಾಟಕದಲ್ಲಿ ಎಚ್.ಡಿ.ದೇವೇಗೌಡರು ಮಾಡುತ್ತಿರುವ ರಾಜಕೀಯವನ್ನು ಉತ್ತರಕರ್ನಾಟಕದಲ್ಲಿ ತಾವೂ ಮಾಡಬಹುದು ಎಂಬ ಲೆಕ್ಕಚಾರವೂ ಅವರ ತಲೆಯಲ್ಲಿ ಸುಳಿದಾಡುತ್ತಿರಬಹುದು.

 ಆದರೆ ಒಂದು ಪ್ರಾದೇಶಿಕ ಪಕ್ಷವನ್ನು ಕಟ್ಟಲು ಬೇಕಾದಷ್ಟು ಸಮಯ, ತಾಳ್ಮೆ, ಜಾಣ್ಮೆ ಯಡಿಯೂರಪ್ಪನವರಲ್ಲಿದೆಯೇ ಎನ್ನುವುದು ಪ್ರಶ್ನೆ. ಅವರು ಎದುರಿಸಬೇಕಾಗಿರುವ ಸಿಬಿಐ ತನಿಖೆ ಯಾವ ಹಾದಿ ಹಿಡಿಯಲಿದೆ ಎನ್ನುವುದನ್ನು ಹೇಳಲಾಗದು.

ಯಡಿಯೂರಪ್ಪನವರ ವಿರುದ್ದದ ಆರೋಪಗಳು ಮತ್ತು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ವ್ಯಕ್ತಪಡಿಸಿರುವ ಗಂಭೀರತೆಯನ್ನು ನೋಡಿದರೆ ಅವರ ಬಂಧನ ಅನಿವಾರ್ಯವಾಗಬಹುದು. ತನಿಖೆ ಅವರ ಕುಟುಂಬದ ಸದಸ್ಯರ ಬೆನ್ನು ಕೂಡಾ ಬಿಡಲಾರದು. ಇದರಿಂದಾಗಿ  ಆರೋಪಗಳಿಂದ ಮುಕ್ತವಾಗಿ ಹೊರಬರಲು ನಡೆಸುವ ಕಾನೂನಿನ ಹೋರಾಟದಲ್ಲಿಯೇ ಅವರು ಮುಳುಗಿಬಿಡುವ ಸಾಧ್ಯತೆಯೂ ಇದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಾದೇಶಿಕ ಪಕ್ಷವನ್ನು ಕಟ್ಟಿ ನಡೆಸಿಕೊಂಡು ಹೋಗುವವರು ಯಾರು?

ಯಡಿಯೂರಪ್ಪನವರೊಬ್ಬರನ್ನು ಹೊರತುಪಡಿಸಿದರೆ ಜತೆಯಲ್ಲಿರುವ ಯಾವ ನಾಯಕರಲ್ಲಿಯೂ ಅವರ ಪರವಾಗಿ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ವರ್ಚಸ್ಸು ಇಲ್ಲವೇ ಸಾಮರ್ಥ್ಯ ಇದ್ದ ಹಾಗಿಲ್ಲ. ಈಗ ರಾಜೀನಾಮೆ ಕೊಟ್ಟವರೆಲ್ಲರೂ ಯಡಿಯೂರಪ್ಪನವರು ಪಕ್ಷ ಬಿಟ್ಟುಹೋದರೆ ಅವರ ಹಿಂದೆ ಹೋಗುತ್ತಾರೆ ಎನ್ನುವುದೂ ಖಾತರಿ ಇಲ್ಲ. ಇವೆಲ್ಲವೂ ತಿಳಿಯದಷ್ಟು ಯಡಿಯೂರಪ್ಪನವರು ದಡ್ಡರಿರಲಾರರು.

ವ್ಯಕ್ತಿ ಎಷ್ಟೇ ಜಾಣನಾಗಿದ್ದರೂ ಕೋಪದ ಕೈಗೆ ಬುದ್ದಿ ಕೊಟ್ಟರೆ ಆಗುವುದೆಲ್ಲವೂ ಅನಾಹುತ. ಅವರ ಮೇಲಿನ ಆರೋಪಗಳಿಗಾಗಲಿ, ಸಿಬಿಐ ಅವರ ವಿರುದ್ಧ ನಡೆಸಲಿರುವ ತನಿಖೆಗಾಗಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಕಾರಣರಲ್ಲ. 

ಗೌಡರು ಕೆಳಗಿಳಿದು ಯಡಿಯೂರಪ್ಪನವರ ಆಪ್ತರು ಮುಖ್ಯಮಂತ್ರಿಯಾದರೂ ಅವರು ಈಗ ಎದುರಿಸುತ್ತಿರುವ ಯಾವ ಕಷ್ಟವೂ ಪರಿಹಾರವಾಗಲಾರದು. ಹೀಗಿದ್ದರೂ ಯಡಿಯೂರಪ್ಪನವರು ತಮ್ಮದೇ ಪಕ್ಷದ ಮುಖ್ಯಮಂತ್ರಿಯ ತಲೆದಂಡಕ್ಕಾಗಿ ಪಟ್ಟು ಹಿಡಿದಿದ್ದಾರೆ. ಇದು ಯಡಿಯೂರಪ್ಪ ಶೈಲಿ. ಅವರು ಸಿಟ್ಟಿಗೆ ಹೆಸರಾದವರೇ ಹೊರತು, ಸಹನೆ-ಸಂಯಮಕ್ಕಲ್ಲ. ತನ್ನ ಒಂದು ಕಣ್ಣುಹೋದರೂ ಸರಿ, ಎದುರಾಳಿಯ ಎರಡೂ ಕಣ್ಣು ಹೋಗಬೇಕೆಂದು ಹೇಳುವಂತಹ ಹಟಮಾರಿ ಅವರು.

ಈ ರೀತಿ ಹತಾಶೆಗೀಡಾಗಿರುವ ವ್ಯಕ್ತಿ ಪರಿಣಾಮಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅವರೇನಾದರೂ ಪಕ್ಷದಿಂದ ಹೊರನಡೆದು ಸ್ವಂತ ಪಕ್ಷ ಕಟ್ಟುವ ನಿರ್ಧಾರಕ್ಕೆ ಬಂದರೆ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಳ್ಳಲಿರುವುದು ಖಚಿತ. ಅದಕ್ಕಿಂತಲೂ ಹೆಚ್ಚು ಅನಾಹುತವಾಗಲಿರುವುದು ಅವರು ಬಾಯಿ ಬಿಟ್ಟಾಗ. ಯಡಿಯೂರಪ್ಪನವರು ಅಕ್ರಮಗಳಲ್ಲಿ ಭಾಗಿಯಾಗಿರುವುದು ನಿಜವೇ ಆಗಿದ್ದರೆ ತನ್ನನ್ನು ಮೌಲ್ಯನಿಷ್ಠ ರಾಜಕೀಯ ಪಕ್ಷ ಎಂದು ಬಿಂಬಿಸಿಕೊಳ್ಳುತ್ತಿರುವ ಅವರ ಪಕ್ಷ ಏನು ಮಾಡುತ್ತಿತ್ತು? ಅದರ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು, ಶಿಕ್ಷೆ ಅವರೊಬ್ಬರೇ ಯಾಕೆ ಅನುಭವಿಸಬೇಕು? ಆದರೆ ಆಗುತ್ತಿರುವುದೇನು? ಯಡಿಯೂರಪ್ಪನವರ ಕೊರಳಿಗೆ ಸಿಬಿಐ ತನಿಖೆಯ ಕುಣಿಕೆ, ಕರ್ನಾಟಕದ ಬಿಜೆಪಿಯ ಎಲ್ಲ ಕರ್ಮಕಾಂಡಗಳಿಗೆ ಮೂಕಪ್ರೇಕ್ಷಕರಾಗಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಎರಡನೇ ಅವಧಿಗೆ ಅಧ್ಯಕ್ಷರಾಗುವ ಅವಕಾಶದ ಉಡುಗೊರೆ. ಇದೆಂತಹ ನ್ಯಾಯ?