Monday, October 22, 2012

ಪ್ರತ್ಯೇಕತೆಯ ಕತ್ತಿ ಬೀಸುವ ಮುನ್ನ


ಕೃಷಿ ಸಚಿವ ಉಮೇಶ್ ಕತ್ತಿಯವರ ಪ್ರತ್ಯೇಕ ರಾಜ್ಯದ ಕೂಗು ಸಮಗ್ರ ಉತ್ತರಕರ್ನಾಟಕದ ಜನರ ಅಭಿಪ್ರಾಯ ಖಂಡಿತ ಅಲ್ಲವಾದ ಕಾರಣ ಅದನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ. ಇಂತಹ ಬೇಜವಾಬ್ದಾರಿ ಬುಡಬುಡಿಕೆಗಳಿಗೆ ಸಮೀಪದಲ್ಲಿರುವ ಕಸದ ಬುಟ್ಟಿಯೇ ಸರಿಯಾದ ಜಾಗ.
ವೃತ್ತಿಯಲ್ಲಿ ಉದ್ಯಮಿ-ವ್ಯಾಪಾರಿಯಾಗಿದ್ದುಕೊಂಡು  ತಾವು ಕಟ್ಟಿಕೊಂಡಿರುವ ಸಾಮ್ರಾಜ್ಯದ ರಕ್ಷಣೆಗಾಗಿ ರಾಜಕೀಯವನ್ನು ಹವ್ಯಾಸವಾಗಿ ಸ್ವೀಕರಿಸಿರುವವರ ಸಂಖ್ಯೆ ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿಯೂ ಹೆಚ್ಚಾಗುತ್ತಿದೆ. (ಕನ್ನಡಿಗರಾದ ವಿಜಯ ಮಲ್ಯ ಇನ್ನೊಂದು ಉದಾಹರಣೆ).

ಇಂತಹ ಹವ್ಯಾಸಿ ರಾಜಕಾರಣಿಗಳಲ್ಲಿ ರಾಜ್ಯಹಿತದ ದೂರದೃಷ್ಟಿ, ಸಾಮಾಜಿಕ ಜವಾಬ್ದಾರಿ ಇಲ್ಲವೇ ನಾಡು-ನುಡಿಯ ಬಗ್ಗೆ ಕಾಳಜಿಯನ್ನು ಕಾಣುವುದು ಸಾಧ್ಯ ಇಲ್ಲ. ಕತ್ತಿಯವರ ಹಿನ್ನೆಲೆ ಮತ್ತು  ನಡವಳಿಕೆಯನ್ನು ನೋಡಿದರೆ ಅವರೂ ಇಂತಹವರ ಸಾಲಿಗೆ ಸೇರಿರುವಂತೆ ಕಾಣುತ್ತಿದೆ. 
ನಾಲಿಗೆ ಸಡಿಲಬಿಟ್ಟು ಅವರು ಆಡಿರುವ ಮಾತುಗಳಲ್ಲಿ ಬೇಜವಾಬ್ದಾರಿತನ ಮತ್ತು ಅಜ್ಞಾನ ಮಾತ್ರ ಅಲ್ಲ ದುಷ್ಟ ಯೋಜನೆಯೂ ಇದ್ದಂತಿದೆ.ಪ್ರತ್ಯೇಕ ರಾಜ್ಯದ ಕೂಗು ಹಾಕಿದವರಲ್ಲಿ ಕತ್ತಿಯವರು ರಾಜ್ಯದಲ್ಲಿಯಾಗಲಿ, ದೇಶದಲ್ಲಿಯಾಗಲಿ  ಮೊದಲಿಗರಲ್ಲ. ಕೊನೆಯವರು ಆಗುವುದೂ ಇಲ್ಲ.  ದೇಶದ ಮೊದಲ ರಾಜ್ಯ ಪುನರ್‌ವಿಂಗಡಣಾ ಸಮಿತಿ ಭಾಷಾವಾರು ರಾಜ್ಯಗಳ ರಚನೆ ಮಾಡಿದೆ ಎಂದು ಸಾಮಾನ್ಯವಾಗಿ ಹೇಳುವುದಿದ್ದರೂ ಅದಕ್ಕೆ ಭಾಷೆಯೊಂದೇ ಆಧಾರವಾಗಿರಲಿಲ್ಲ ಎನ್ನುವುದು ವಾಸ್ತವ.
ಹಾಗಾಗಿದ್ದರೆ ಅಲ್ಪಸ್ವಲ್ಪ ಬದಲಾವಣೆಯೊಡನೆ ಹಿಂದಿ ಭಾಷೆಯನ್ನು ಆಡುವ ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶಗಳು ಒಂದೇ ರಾಜ್ಯವಾಗಬೇಕಿತ್ತು. ಮೊದಲು ಸ್ಥಾಪನೆಗೊಂಡ ಹದಿನಾಲ್ಕು ರಾಜ್ಯಗಳ ಪೈಕಿ ಕರ್ನಾಟಕ, ಆಂಧ್ರಪ್ರದೇಶ,ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಗಳು ಮಾತ್ರ ಭಾಷೆಯ ಆಧಾರದಲ್ಲಿ ರಚನೆಗೊಂಡ ರಾಜ್ಯಗಳು. ಉಳಿದ ರಾಜ್ಯಗಳ ರಚನೆಗೆ ಭಾಷೆಯ ಜತೆಗೆ ಬೇರೆ ಕಾರಣಗಳೂ ಇದ್ದವು.

ಇದರಿಂದಾಗಿಯೇ ಭಾಷೆಯ ಆಧಾರದಲ್ಲಿ ರಚನೆಗೊಂಡ ರಾಜ್ಯಗಳಲ್ಲಿಯೂ ಪ್ರತ್ಯೇಕ ರಾಜ್ಯದ ಕೂಗು ಎದ್ದಿರುವುದು. ಭಾಷಾಭಿಮಾನದ ಭಾವುಕತೆ ಇಳಿಯುತ್ತಿದ್ದಂತೆಯೇ ಎದುರಾದ ಹಿಂದುಳಿಯುವಿಕೆ ಮತ್ತು ಪ್ರಾದೇಶಿಕ ಅಸಮಾನತೆಯ ವಾಸ್ತವ  ಪ್ರತ್ಯೇಕ  ರಾಜ್ಯದ ಬೇಡಿಕೆಗೆ ಮುಖ್ಯ ಪ್ರೇರಣೆ.
ಈ ಹಿನ್ನೆಲೆಯಿಂದಲೇ ಕತ್ತಿಯವರ ಹೇಳಿಕೆಯನ್ನು ಗಮನಿಸಬೇಕಾಗುತ್ತದೆ. ರಾಜ್ಯದಲ್ಲಿ ಈವರೆಗೆ ಸರ್ಕಾರದಿಂದ ಮತ್ತು ಸ್ವತಂತ್ರವಾಗಿ ನಡೆದಿರುವ ಬಹುತೇಕ ಸಾಮಾಜಿಕ-ಆರ್ಥಿಕ ಸಮೀಕ್ಷೆಗಳು ಹಿಂದುಳಿದಿದೆ ಎಂದು ಗುರುತಿಸಿರುವುದು ಉತ್ತರ ಕರ್ನಾಟಕದ ಗುಲ್ಬರ್ಗ, ಬಿಜಾಪುರ, ಬಾಗಲಕೋಟೆ, ಬೀದರ್, ಕೊಪ್ಪಳ ,ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳನ್ನು.
ಮಾನವ ಅಭಿವೃದ್ಧಿಯ ಸೂಚಿಗಳಾದ ಸಾಕ್ಷರತೆ, ಶಿಕ್ಷಣ, ಆರೋಗ್ಯ, ಲಿಂಗಸಮಾನತೆ ಮತ್ತು ಪರಿಶಿಷ್ಟಜಾತಿ-ಪಂಗಡಗಳ ಸ್ಥಿತಿಗತಿಗಳ ನೆಲೆಯಿಂದ ನೋಡಿದರೂ ಈ ಏಳು ಜಿಲ್ಲೆಗಳು ಹಿಂದುಳಿದಿರುವುದು ಸ್ಪಷ್ಟ. ರಾಜ್ಯದ ಜನಸಂಖ್ಯೆಯಲ್ಲಿ ಈ ಏಳು ಜಿಲ್ಲೆಗಳ ಪಾಲು ಶೇಕಡಾ ಇಪ್ಪತ್ತೈದು, ಆದರೆ ರಾಜ್ಯದ ವರಮಾನದಲ್ಲಿ ಪಡೆದಿರುವ ಪಾಲು ಶೇಕಡಾ ಹದಿನೇಳು.
ಹಿಂದುಳಿದಿರುವ ಈ ಜಿಲ್ಲೆಗಳ ಜತೆ ಅವಿಭಜಿತ ಧಾರವಾಡವನ್ನಾಗಲಿ ಇಲ್ಲವೇ ಬೆಳಗಾವಿ ಜಿಲ್ಲೆಯನ್ನಾಗಲಿ ಹೋಲಿಸುವುದು ಸಾಧ್ಯ ಇಲ್ಲ. ಘಟಪ್ರಭಾ ಮತ್ತು ಮಲಪ್ರಭಾ ಮಾತ್ರವಲ್ಲ ಕೃಷ್ಣಾ ನದಿ ನೀರನ್ನು ಪಡೆದಿರುವ ಬೆಳಗಾವಿ ಜಿಲ್ಲೆಯ ರೈತರು ಉತ್ತರಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಸಾಕಷ್ಟು ಸ್ಥಿತಿವಂತರೇ ಆಗಿದ್ದಾರೆ. ಈ ಜಿಲ್ಲೆಯ ಬೆಳಗಾವಿ, ರಾಯಭಾಗ, ಹುಕ್ಕೇರಿ, ಚಿಕ್ಕೋಡಿ ಹಾಗೂ ಗೋಕಾಕ ಮತ್ತು ಅಥಣಿ ತಾಲ್ಲೂಕಿನ ಕೆಲವು ಭಾಗಗಳು ಸಮೃದ್ಧವಾಗಿವೆ.
ಹಿಂದುಳಿದಿರುವುದು ಬೈಲಹೊಂಗಲ, ರಾಮದುರ್ಗ ಹಾಗೂ ಗೋಕಾಕ ಮತ್ತು ಅಥಣಿಯ ಕೆಲವು ಭಾಗಗಳು ಮಾತ್ರ. ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಜತೆ ಇರುವ ಸಂಪರ್ಕ ಕೂಡಾ ಇಲ್ಲಿನ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ನೆರವಾಗಿದೆ. ಉತ್ತರ ಕರ್ನಾಟಕದ ಇತರ ಜಿಲ್ಲೆಗಳ ಜತೆಗಿನ ಹೋಲಿಕೆಯಲ್ಲಿ ಬೆಳಗಾವಿ ಹಿಂದುಳಿದಿದೆ ಇಲ್ಲವೇ ಪ್ರಾದೇಶಿಕ ಅಸಮಾನತೆಗೆ ಗುರಿಯಾಗಿದೆ ಎಂದು ಆರೋಪಿಸುವಂತಿಲ್ಲ.
 ಮಹಾರಾಷ್ಟ್ರ ಕಣ್ಣಿಟ್ಟಿರುವ ಕಾರಣಕ್ಕಾಗಿ ಇದು ಕರ್ನಾಟಕ ರಾಜ್ಯದ ಮುದ್ದಿನ ಕೂಸು. ಮತ್ತೆಮತ್ತೆ ಬೆಳಗಾವಿ ನಮ್ಮದು ಎನ್ನುವುದನ್ನು ಸಾಬೀತುಪಡಿಸುವುದಕ್ಕಾಗಿ ರಾಜ್ಯ ಸರ್ಕಾರ ಬೊಕ್ಕಸದಿಂದ ಧಾರಾಳವಾಗಿ ಇಲ್ಲಿಗೆ ಹಣ ಹರಿಸುತ್ತದೆ. ಇದಕ್ಕೆ ಇತ್ತೀಚಿನ ಉದಾಹರಣೆ ಅಲ್ಲಿ ನಿರ್ಮಿಸಲಾದ ಸುವರ್ಣ ಸೌಧ.
ಪ್ರಾದೇಶಿಕ ಅಸಮಾನತೆ ಮತ್ತು ಹಿಂದುಳಿಯುವಿಕೆಯನ್ನು ತೊಡೆದುಹಾಕುವ ಉದ್ದೇಶದಿಂದ ನೋಡಿದರೆ ಈ ಸುವರ್ಣಸೌಧ ಗುಲ್ಬರ್ಗ ಇಲ್ಲವೇ ಬೀದರ್ ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಾಣವಾಗಬೇಕಿತ್ತು. ಬೆಳಗಾವಿ ನಮ್ಮದಾಗಿಯೇ ಉಳಿಸಬೇಕೆಂಬ ಬದ್ಧತೆ ಸಮಸ್ತ ಕನ್ನಡಿಗರಿಗೆ ಇರುವ ಕಾರಣಕ್ಕಾಗಿಯೇ ರಾಜ್ಯ ಸರ್ಕಾರ ಸಾರ್ವಜನಿಕ ತೆರಿಗೆ ಹಣವನ್ನು ಉದಾರವಾಗಿ ಬೆಳಗಾವಿ ಜಿಲ್ಲೆಗೆ ನೀಡಿದಾಗಲೂ ಯಾರೂ ಅದರ ವಿರುದ್ಧ ಚಕಾರ ಎತ್ತಿಲ್ಲ.
ಇದರ ಹೊರತಾಗಿಯೂ ಅಲ್ಲಿನ ಚುನಾಯಿತ ಪ್ರತಿನಿಧಿಯೊಬ್ಬರು ಪ್ರತ್ಯೇಕತೆಯ ಕತ್ತಿಯನ್ನು ಅನಗತ್ಯವಾಗಿ ಝಳಪಿಸಿ ಅಮಾಯಕ ಜನರ ದಾರಿ ತಪ್ಪಿಸುವ ಕೆಲಸ ಮಾಡಲು ಹೊರಟಿರುವುದನ್ನು ನೋಡಿದರೆ ಅವರಿಗೆ ಬೇರೆ ಉದ್ದೇಶಗಳಿರಬಹುದೆಂಬ ಅನುಮಾನ ಮೂಡುತ್ತದೆ.
ಮುಂದೊಂದು ದಿನ ಉತ್ತರಕರ್ನಾಟಕ ಎಂಬ ರಾಜ್ಯ ರಚನೆಯಾದರೆ ಅದರ ರಾಜಧಾನಿ ಬೆಳಗಾವಿಯಾಗಲಿ, ಅದರ ಮುಖ್ಯಮಂತ್ರಿ ಬೆಳಗಾವಿಯವರಾಗಲಿ ಎಂಬ ದೂರಾಲೋಚನೆಯೂ ಅವರಲ್ಲಿದ್ದಿರಬಹುದೇನೋ?
ಬಹುಭಾಷೆ,ಧರ್ಮ ಮತ್ತು ಸಂಸ್ಕೃತಿ ಮಾತ್ರವಲ್ಲ ಬಹು ಬಗೆಯ ಅಸಮಾನತೆಯ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿರುವ ಒಂದು ದೇಶದಲ್ಲಿ ಪ್ರತ್ಯೇಕ ರಾಜ್ಯದ ಎಲ್ಲ ಬೇಡಿಕೆಗಳನ್ನು ಸಾರಾಸಗಟಾಗಿ ತಳ್ಳಿಹಾಕಲಾಗುವುದಿಲ್ಲ ಎನ್ನುವುದು ನಿಜ. ಪ್ರತಿಯೊಂದನ್ನೂ ಪ್ರತ್ಯೇಕ ಮಾನದಂಡಗಳ ಮೂಲಕ 
ಪರಿಶೀಲನೆಗೊಳಪಡಿಸಬೇಕಾಗುತ್ತದೆ. ಉದಾಹರಣೆಗೆ ಉತ್ತರಪ್ರದೇಶ ಮತ್ತು ಬಿಹಾರ ರಾಜ್ಯಗಳು ಹಿಂದುಳಿಯಲು ಅದರ ವಿಸ್ತೀರ್ಣವೂ ಪ್ರಮುಖ ಕಾರಣವಾಗಿತ್ತು. ಸರ್ಕಾರ ಮತ್ತು ಪ್ರಜೆಗಳ ನಡುವಿನ ಮಾನಸಿಕ ದೂರ ಮಾತ್ರವಲ್ಲ ಭೌಗೋಳಿಕ ದೂರ ಕೂಡಾ ಪ್ರಗತಿಗೆ ಮಾರಕವಾಗಬಲ್ಲದು.
ಜಯಪ್ರಕಾಶ್ ನಾರಾಯಣ್ ಅವರೇ ಉತ್ತರಪ್ರದೇಶವನ್ನು ಐದುರಾಜ್ಯಗಳಾಗಿ ವಿಂಗಡಿಸಬೇಕೆಂಬ ಸಲಹೆ ನೀಡಿದ್ದರು. ಹನ್ನೆರೆಡು ವರ್ಷಗಳ ಹಿಂದೆ ಜಾರ್ಖಂಡ್, ಉತ್ತರಖಂಡ ಮತ್ತು ಛತ್ತೀಸ್‌ಗಡ ರಾಜ್ಯಗಳ ರಚನೆಯಾಗಿದ್ದು ಭಾಷೆ, ಜಾತಿ,ಧರ್ಮದ ಆಧಾರಗಳಲ್ಲಿ ಅಲ್ಲ.
ಆಡಳಿತದ ಅನುಕೂಲತೆಯ ದೃಷ್ಟಿಯಿಂದ ರಚನೆಗೊಂಡ ಆ ರಾಜ್ಯಗಳ ಪ್ರಗತಿ ಅವುಗಳ ಮೂಲ ರಾಜ್ಯಗಳಾದ ಬಿಹಾರ ಮತ್ತು ಉತ್ತರಪ್ರದೇಶಗಳಿಗಿಂತ ಉತ್ತಮವಾಗಿವೆ. ಈ ಅನುಭವದ ಹಿನ್ನೆಲೆಯಲ್ಲಿಯೇ  ಹರಿತ್‌ಪ್ರದೇಶ ಮತ್ತು ಪೂರ್ವಾಂಚಲಗಳೆಂಬ ಎರಡು ಪ್ರತ್ಯೇಕ ರಾಜ್ಯರಚನೆಯ ಬೇಡಿಕೆ ಉತ್ತರಪ್ರದೇಶದಲ್ಲಿ ಹುಟ್ಟಿಕೊಂಡಿರುವುದು.
ಆದರೆ ಜಾತಿ-ಧರ್ಮ, ಭಾಷಾ ವೈವಿಧ್ಯ, ಸಂಸ್ಕೃತಿ-ಉಪಸಂಸ್ಕೃತಿ, ಜನಾಂಗೀಯ ಅನನ್ಯತೆಯ ಅಂಶಗಳ ಆಧಾರದಲ್ಲಿ ಪ್ರತ್ಯೇಕ ರಾಜ್ಯಗಳನ್ನು ಮಾಡುವುದು ಕೊನೆಯಿಲ್ಲದ ಕಸರತ್ತು ಎನ್ನುವುದನ್ನು ದೇಶದ ಈಶಾನ್ಯಭಾಗದ ಅನುಭವ ಹೇಳುತ್ತಿದೆ.
ಸ್ವಾತಂತ್ರ್ಯಪೂರ್ವದ ಅಸ್ಸಾಂ ಈಗ ಏಳು ರಾಜ್ಯಗಳಾಗಿ ಒಡೆದುಹೋಗಿರುವುದು ಹಿಂದುಳಿಯುವಿಕೆ ಇಲ್ಲವೇ ಪ್ರಾದೇಶಿಕ ಅಸಮಾನತೆಯಿಂದಾಗಿ ಅಲ್ಲ, ಅದಕ್ಕೆ ಜಾತಿ,ಧರ್ಮ ಮತ್ತು ಜನಾಂಗೀಯ ಪ್ರತ್ಯೇಕತೆ ಕಾರಣ.

ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ,ನಾಗಾಲ್ಯಾಂಡ್, ಅರುಣಾಚಲ ಮತ್ತು ತ್ರಿಪುರ ಸೇರಿದಂತೆ ಈಶಾನ್ಯದ `ಸಪ್ತಸುಂದರಿಯರ~  ಒಟ್ಟು ಜನಸಂಖ್ಯೆ ಸುಮಾರು ಮೂರು ಮುಕ್ಕಾಲು ಕೋಟಿ, ಒಟ್ಟು ವಿಸ್ತೀರ್ಣ ಎರಡೂವರೆ ಲಕ್ಷ ಚದರ ಕಿ.ಮೀ. ಏಳು ಭಾಗಗಳಾದ ನಂತರವೂ ಅಲ್ಲಿ ಪ್ರತ್ಯೇಕತೆಯ ಬೇಡಿಕೆ ನಿಂತಿಲ್ಲ  ಮಾತ್ರವಲ್ಲ ಪ್ರತ್ಯೇಕಗೊಂಡ ರಾಜ್ಯಗಳಲ್ಲಿ ಆರ್ಥಿಕ,ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ನಿರೀಕ್ಷೆಗೆ ತಕ್ಕಂತೆ ನಡೆದಿಲ್ಲ ಎನ್ನುವುದನ್ನು ಗಮನಿಸಬೇಕಾಗುತ್ತದೆ. ಈ ಏಳೂ ರಾಜ್ಯಗಳ ಒಳಗೆ  ಪ್ರತ್ಯೇಕ  ರಾಜ್ಯ ಮತ್ತು ಸ್ವಾಯತ್ತ ಪ್ರದೇಶ ಬೇಕೆಂದು  ಮಾತ್ರವಲ್ಲ ಪ್ರತ್ಯೇಕ ದೇಶ ಬೇಕೆಂಬ ಕೂಗೂ ಕೇಳುತ್ತಿದೆ.
ಈ ಹಿನ್ನೆಲೆಯಲ್ಲಿ ಒಂದು ಪ್ರದೇಶದ ಭಾಷೆ, ಧರ್ಮ ಮತ್ತು ಸಂಸ್ಕೃತಿಯ ಅನನ್ಯತೆಯನ್ನುಉಳಿಸಲು ಇಲ್ಲವೇ ಆ ಪ್ರದೇಶದ   ಪ್ರಾದೇಶಿಕ ಅಸಮಾನತೆಯನ್ನು ತೊಡೆದುಹಾಕಲು ಪ್ರತ್ಯೇಕ ರಾಜ್ಯ ರಚನೆ ಮಾತ್ರ ದಾರಿಯೇ ಎಂಬ ಬಗ್ಗೆ ಮರುಚಿಂತನೆ ನಡೆಸಬೇಕಾದ ಅಗತ್ಯ ಇದೆ.
ಉತ್ತರಕರ್ನಾಟಕದಲ್ಲಿ ಆಗಾಗ ಕೇಳಿಬರುತ್ತಿರುವ  ಪ್ರತ್ಯೇಕ  ರಾಜ್ಯದ ಬೇಡಿಕೆಗೆ ಖಂಡಿತ ಜಾತಿ-ಧರ್ಮ ಇಲ್ಲವೇ ಭಾಷೆ ಕಾರಣ ಅಲ್ಲ. ದಕ್ಷಿಣದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರದ ಜಿಲ್ಲೆಗಳು ಹಿಂದುಳಿದಿರುವುದು ನಿಜವಾದರೂ ಇದಕ್ಕೆ ರಾಜ್ಯದ ವಿಸ್ತೀರ್ಣ ಇಲ್ಲವೇ ಭೌಗೋಳಿಕ ದೂರ ಕಾರಣ ಎಂದು ಹೇಳಲಾಗದು.  ಕರ್ನಾಟಕ ರಾಜ್ಯದ ಸಂಪರ್ಕ ಮತ್ತು ಸಾರಿಗೆ ವ್ಯವಸ್ಥೆ ದೇಶದ ಹಲವಾರು ರಾಜ್ಯಗಳಿಗಿಂತ ಉತ್ತಮವಾಗಿದೆ.
ಉತ್ತರಕರ್ನಾಟಕದ ಹಿಂದುಳಿಯುವಿಕೆ ಬಗ್ಗೆ ನಡೆಯುವ ಚರ್ಚೆಗಳಲ್ಲಿ ಸಾಮಾನ್ಯವಾಗಿ ಅಲ್ಲಿನ ಭೂಮಿಯ ಅಸಮಾನ ಹಂಚಿಕೆಯ ಪ್ರಸ್ತಾಪವಾಗುವುದಿಲ್ಲ. ಗುಲ್ಬರ್ಗ, ಬಿಜಾಪುರ, ಬಾಗಲಕೋಟೆ, ಬೀದರ್, ಕೊಪ್ಪಳ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಭೂ ಹಿಡುವಳಿಗಳ ಒಟ್ಟು ವಿಸ್ತೀರ್ಣ 51.31 ಲಕ್ಷ ಹೆಕ್ಟೇರ್‌ಗಳು. ಇದರಲ್ಲಿ  ಅತಿಸಣ್ಣ, ಸಣ್ಣ ಮತ್ತು ಅರೆಮಧ್ಯಮ ರೈತರಿಗೆ ಸೇರಿದ ಹಿಡುವಳಿಯ ಪ್ರಮಾಣ ಶೇಕಡಾ 76.35,
ಜಮೀನ್ದಾರರೆನಿಸಿಕೊಂಡ ಮಧ್ಯಮ ಮತ್ತು ದೊಡ್ಡ ರೈತರಿಗೆ ಸೇರಿದ ಹಿಡುವಳಿಯ ಪ್ರಮಾಣ ಶೇಕಡಾ 23.65. ಈ ಏಳು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ರೈತರ ಹಿಡುವಳಿಯ ಪ್ರಮಾಣ ಶೇಕಡಾ 90.78 ಮತ್ತು ಜಮೀನ್ದಾರಿ ಹಿಡುವಳಿಗಳ ಪ್ರಮಾಣ ಶೇಕಡಾ 9.22. ಈ ಅಸಮಾನತೆಯ ವಿರುದ್ಧ ಉಮೇಶ್ ಕತ್ತಿಯವರಂತಹ ನಾಯಕರು ಎಂದಾದರೂ ದನಿ ಎತ್ತಿದ್ದಾರೆಯೇ?
 ಉತ್ತರ ಕರ್ನಾಟಕ ಹಿಂದುಳಿಯಲು ಇಲ್ಲವೆ ಪ್ರಾದೇಶಿಕ ಅಸಮಾನತೆಗೆ ಗುರಿಯಾಗಲು ಮುಖ್ಯವಾಗಿ ಈ ರಾಜ್ಯವನ್ನು ಆಳಿದವರ ಧೋರಣೆ ಕಾರಣ. ಇದು ಕೇವಲ ದಕ್ಷಿಣಕರ್ನಾಟಕದ ರಾಜಕಾರಣಿಗಳ ಪೂರ್ವಗ್ರಹ ಎನ್ನುವುದಕ್ಕೂ ಆಧಾರಗಳಿಲ್ಲ. ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂತ ಉತ್ತರಕರ್ನಾಟಕದ `ಮಣ್ಣಿನ ಮಕ್ಕಳ~ ಕಾಲದಲ್ಲಿಯೂ ಈ ಅನ್ಯಾಯ ಮುಂದುವರಿದಿದೆ.

ಸರ್ಕಾರವೆಂದರೆ ಕೇವಲ ಮುಖ್ಯಮಂತ್ರಿ ಇಲ್ಲವೇ ವಿಧಾನಸೌಧದಲ್ಲಿ ಕೂತಿರುವ ಒಂದಷ್ಟು ಅಧಿಕಾರಿಗಳು ಮಾತ್ರ ಅಲ್ಲ. ಸರ್ವಾಧಿಕಾರಿಯೆಂದು ಆರೋಪಿಸುವಂತಹ ಸರ್ವಶಕ್ತ ಮುಖ್ಯಮಂತ್ರಿಗಳ ಕಾಲ ಕಳೆದುಹೋಗಿದೆ. ಬಹಳಷ್ಟು ಸಂದರ್ಭಗಳಲ್ಲಿ ಮುಖ್ಯಮಂತ್ರಿಯವರಿಗಿಂತ ಉಮೇಶ್ ಕತ್ತಿಯವರಂತಹ ಸಚಿವರು ರಾಜಕೀಯವಾಗಿ ಹೆಚ್ಚು ಬಲಶಾಲಿಯಾಗಿರುತ್ತಾರೆ.
ಮನಸ್ಸು ಮಾಡಿದರೆ ಇಂತಹವರು ಸರ್ಕಾರದ ಮೇಲೆ ಒತ್ತಡ ಹೇರಿ ಎಂತಹ ಅಸಾಧ್ಯ ಕೆಲಸವನ್ನೂ ಮಾಡಿಸುವಷ್ಟು ಸಶಕ್ತರು. ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮೂರು ವರ್ಷಗಳ ಹಿಂದಿನ ಅತಿವೃಷ್ಟಿಯಿಂದಾಗಿ ಮನೆಮಾರು ಕಳೆದುಕೊಂಡ ಬಹಳಷ್ಟು ಕುಟುಂಬಗಳು ಈಗಲೂ ಸ್ವಂತಕ್ಕೊಂದು ಸೂರು ಪಡೆಯಲಿಕ್ಕಾಗದೆ  ತಗಡುಶೀಟುಗಳ ತಾತ್ಕಾಲಿಕ ಮನೆಗಳಲ್ಲಿ ನರಕಯಾತನೆ ಅನುಭವಿಸುತ್ತಿವೆ.
ಉತ್ತರ ಕರ್ನಾಟಕಕ್ಕೆ ಸೇರಿರುವವರೇ ಮುಖ್ಯಮಂತ್ರಿಗಳಾದರೂ ಅವರ ಬವಣೆ ಕೊನೆಗೊಂಡಿಲ್ಲ. ಪ್ರತ್ಯೇಕ  ರಾಜ್ಯದ ಬಗ್ಗೆ ಮಾತನಾಡುತ್ತಿರುವ ಉಮೇಶ್ ಕತ್ತಿಯವರು ಮೊದಲು ದನಿ ಎತ್ತಬೇಕಾಗಿರುವುದು ಈ ರೀತಿ ನೊಂದವರ ಪರವಾಗಿ ಅಲ್ಲವೇ?
ಆಳುವವರ ಇಂತಹ ಅಸಂವೇದನಾಶೀಲ ಮನಸ್ಥಿತಿ ಬದಲಾಗದೆ ಬೆಳಗಾವಿಯಲ್ಲಿ ಕಟ್ಟಿದ ಸುವರ್ಣ ಸೌಧದಲ್ಲಿ ಇನ್ನೊಂದು ಮುಖ್ಯಮಂತ್ರಿಯವರ ಕುರ್ಚಿಯನ್ನು  ಮಾಡಿಸಿ ಅದರಲ್ಲಿ ಕತ್ತಿ ಇಲ್ಲವೇ ಕೋರೆಯವರನ್ನು ಕೂರಿಸಿದರೂ ಉತ್ತರ ಕರ್ನಾಟಕದ ಭಾಗ್ಯದ ಬಾಗಿಲು ತೆರೆಯಲಾರದು. ಆದುದರಿಂದ ಇಂತಹ ದೂರಾಲೋಚನೆ ಇಲ್ಲವೇ ದುರಾಲೋಚನೆಯ `ಕತ್ತಿ~ಯನ್ನು ಒರೆಯಲ್ಲಿಡುವುದೇ ಕ್ಷೇಮ.

ಎಸ್.ಎಂ. ಕೃಷ್ಣ ಸಮಸ್ಯೆಯೇ, ಪರಿಹಾರವೇ? OCT 29 2012


ವಿದೇಶಾಂಗ ವ್ಯವಹಾರ ಸಚಿವ ಖಾತೆಗೆ ರಾಜೀನಾಮೆ ನೀಡಿರುವ ಎಸ್.ಎಂ. ಕೃಷ್ಣ  ರಾಜ್ಯ ರಾಜಕಾರಣಕ್ಕೆ ಯಾವ ಪಾತ್ರ ಧರಿಸಿ ಮರಳಲಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟ ಇಲ್ಲ. ಆದರೆ ರಾಜಕೀಯ ಸನ್ಯಾಸವನ್ನು ಘೋಷಿಸದೆ ಇರುವುದರಿಂದ ಕೃಷ್ಣ ಅವರು ಬೆಂಗಳೂರಿಗೆ ಬಂದು ಇಲ್ಲಿನ ರಾಜಕೀಯವನ್ನು `ಯುವಕರಿಗೆ~ ಬಿಟ್ಟುಕೊಟ್ಟು ತಮ್ಮ ನೆಚ್ಚಿನ ಶಟಲ್ ಬ್ಯಾಡ್ಮಿಂಟನ್ ಆಡುತ್ತಾ ಕಾಲ ಕಳೆಯಲಿದ್ದಾರೆ ಎಂದು ಹೇಳಲಾಗುವುದಿಲ್ಲ.

ಅವರು ಅಂತಹ ನಿರ್ಧಾರ ಮಾಡಿದರೂ ಬೆಂಬಲಿಗರು ಅವರನ್ನು ಸುಮ್ಮನಿರಲು ಬಿಡಲಾರರು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷತೆ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಹೀಗೆ ರಾಜಕಾರಣದಲ್ಲಿ ಮಹತ್ವದ ಸ್ಥಾನಗಳೆಲ್ಲವನ್ನೂ ಅಲಂಕರಿಸಿರುವ ಕೃಷ್ಣ ಅವರಿಗೆ ಅವರದ್ದೇ ಆಗಿರುವ ಬೆಂಬಲಿಗರಿದ್ದಾರೆ.
ಅವರ ಶಕ್ತಿ, ಅನುಭವ, ಸಂಪರ್ಕ, ಸಂಪನ್ಮೂಲಗಳ ವಿಸ್ತಾರ ದೊಡ್ಡದು. ವಯಸ್ಸಿನಲ್ಲಿಯೂ ಹಿರಿಯರು, ಹೈಕಮಾಂಡ್‌ನಲ್ಲಿ ಈಗಲೂ ಅವರ ಮಾತಿಗೆ ಒಂದಿಷ್ಟು ಬೆಲೆ ಇದೆ. ಆದುದರಿಂದ ಅವರು ಕರ್ನಾಟಕಕ್ಕೆ ಯಾವ ಪಾತ್ರದಲ್ಲಿ ಪ್ರವೇಶಿಸಿದರೂ ರಾಜ್ಯ ರಾಜಕಾರಣ ಮೊದಲಿನಂತೆ ಇರಲಾರದು.
ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಕೃಷ್ಣ ಸಕ್ರಿಯವಾದರೆ ಅನುಕೂಲತೆಗಳಿವೆಯೇ? ಖಂಡಿತ ಇವೆ. ಮೊದಲನೆಯದಾಗಿ ಕೃಷ್ಣ ತಮ್ಮ `ಇಮೇಜ್~ ಬಗ್ಗೆ ಸದಾ ಧ್ಯಾನಸ್ಥರಾಗಿರುವವರು. ವಿದೇಶಿ ಶಿಕ್ಷಣ, ಇಂಗ್ಲಿಷ್ ಭಾಷೆಯ ಮೇಲಿನ ಪ್ರಭುತ್ವ, ಎಚ್ಚರಿಕೆಯ ಮಾತುಗಳು, ಉಡುಗೆ-ತೊಡುಗೆ, ಅಪಾರವಾದ ಸಂಯಮ, ಎದುರಿಗಿದ್ದವರಲ್ಲಿ ಗೌರವದ ಭಾವನೆಯನ್ನು ಹುಟ್ಟಿಸುವಂತಹ ನಡವಳಿಕೆಗಳ ಮೂಲಕ ಅವರು ತಮ್ಮ `ಇಮೇಜ್~ ಪೋಷಿಸಿಕೊಂಡು ಬಂದವರು.
ಕಳೆದ ಏಳೆಂಟು ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿಯೂ ರಾಜಕಾರಣಿಗಳು ಗೌರವ ಕಳೆದುಕೊಂಡಿದ್ದು, ಬೀದಿಬೀದಿಗಳಲ್ಲಿ ಜನ ತುಚ್ಚವಾಗಿ ಮಾತನಾಡುವಂತಾಗಿದೆ. ರಾಜಕಾರಣಿಗಳು ಭ್ರಷ್ಟರು ಎನ್ನುವುದಷ್ಟೇ ಇದಕ್ಕೆ ಕಾರಣ ಅಲ್ಲ, ಭ್ರಷ್ಟಾಚಾರದ ಹಣದಿಂದ ಗಳಿಸಿದ ಶ್ರೀಮಂತಿಕೆಯ ಅಸಹ್ಯಕರ ಪ್ರದರ್ಶನ, ರೆಸಾರ್ಟ್ ರಾಜಕೀಯ, ಸದನದಲ್ಲಿಯೇ ಅಶ್ಲೀಲಚಿತ್ರಗಳ ವೀಕ್ಷಣೆ, ಸೊಂಟದ ಕೆಳಗಿನ ಭಾಷೆಯಲ್ಲಿ ಬೈದಾಟ, ರಕ್ತದ ರುಚಿ ತೋರಿಸುವ ಬೆದರಿಕೆ ಮೊದಲಾದ ಅವರ ಒಟ್ಟು ನಡವಳಿಕೆಯೇ ಜನರಲ್ಲಿ ರೇಜಿಗೆ ಹುಟ್ಟಿಸಿದೆ.
ಇಂತಹ ವಾತಾವರಣದಲ್ಲಿ ಎಸ್.ಎಂ.ಕೃಷ್ಣ ಅವರ `ಭಿನ್ನ ವ್ಯಕ್ತಿತ್ವ~ ಸಹಜವಾಗಿಯೇ ಜನರ ಮನಸ್ಸನ್ನು ಸೆಳೆಯಬಹುದು. ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ನಗರಕೇಂದ್ರಿತ, ಮಧ್ಯಮವರ್ಗ ಮತ್ತು ಯುವವರ್ಗಕ್ಕೆ ಸೇರಿರುವ ಮತದಾರರಲ್ಲಿ ಬಹಳಷ್ಟು ಮಂದಿಗೆ ಕೃಷ್ಣ ಇಷ್ಟವಾಗಬಹುದು.
ಎರಡನೆಯ ಅನುಕೂಲತೆ ಅವರಲ್ಲಿರುವ ಅಭಿವೃದ್ಧಿಯ ಮುನ್ನೋಟ. ಬಹಳಷ್ಟು ರಾಜಕೀಯ ಪಕ್ಷಗಳು ಸೀರೆ, ಮಂಗಳಸೂತ್ರ, ಸೈಕಲ್ ಹಂಚಿಕೆ ಇತ್ಯಾದಿ ಅಗ್ಗದ ಜನಪ್ರಿಯ ಕಾರ್ಯಕ್ರಮಗಳ ದೌರ್ಬಲ್ಯಕ್ಕೆ ಬಿದ್ದುಬಿಡುತ್ತವೆ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಚಿಸಿದ್ದ ತೆರಿಗೆ ಸುಧಾರಣಾ ಆಯೋಗ, ಆಡಳಿತ ಸುಧಾರಣಾ ಆಯೋಗ, ಬೆಂಗಳೂರು ಅಭಿವೃದ್ಧಿ ಕಾರ್ಯಪಡೆ, ಬಂಡವಾಳ ಹೂಡಿಕೆದಾರರ ಜಾಗತಿಕ ಸಮಾವೇಶ, ಐಟಿ ಮತ್ತು ಬಿಟಿ ಉದ್ಯಮಕ್ಕೆ ಕೊಟ್ಟ ಪ್ರೋತ್ಸಾಹ, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ, ಗ್ರಾಮೀಣಪ್ರದೇಶದಲ್ಲಿ ವಸತಿ ನಿರ್ಮಾಣದಂತಹ ಯೋಜನೆಗಳು ಒಂದು ಸರ್ಕಾರ ಹೊಂದಿರಬೇಕಾದ ಅಭಿವೃದ್ಧಿಯ ಮುನ್ನೋಟಕ್ಕೆ ಮಾದರಿಯಾಗಿತ್ತು. ಕಳೆದ ಎಂಟು ವರ್ಷಗಳ ಆಡಳಿತವನ್ನು ಕಂಡ ಮತದಾರನಿಗೆ ಕೃಷ್ಣ ಅವರ ಕಾಲದ ಸಾಧಾರಣ ಸಾಧನೆ ಕೂಡಾ ಹಿರಿದಾದುದು ಎಂದು ಅನಿಸದೆ ಇರದು.
ಮೂರನೆಯದಾಗಿ ಕೃಷ್ಣ ಅವರ ವಯಸ್ಸು ಮತ್ತು ಅನುಭವ ಸಹಜವಾಗಿ ಯಜಮಾನನ ಸ್ಥಾನವನ್ನು ತಂದುಕೊಟ್ಟಿದೆ. ಅವರಿಗಿಂತ ಹಿರಿಯ ಜನಪ್ರಿಯ ನಾಯಕರು ರಾಜ್ಯ ಕಾಂಗ್ರೆಸ್‌ನಲ್ಲಿ ಬೇರೆ ಯಾರೂ ಇಲ್ಲ. ಒಳಜಗಳಕ್ಕೆ ಕುಖ್ಯಾತಿ ಪಡೆದ ಪಕ್ಷ ಕಾಂಗ್ರೆಸ್.
ಮೂರು ಮಂದಿ ಇದ್ದಲ್ಲಿ ನಾಲ್ಕು ಗುಂಪುಗಳಿರುತ್ತವೆ. ಡಾ.ಪರಮೇಶ್ವರ್, ಸಿದ್ದರಾಮಯ್ಯ, ಶಾಮನೂರು ಶಿವಶಂಕರಪ್ಪ ಹೀಗೆ ಪ್ರತಿ ನಾಯಕನ ಸುತ್ತ ಮರಿನಾಯಕರ ಗುಂಪುಗಳಿರುತ್ತವೆ. ಇವರ ನಡುವಿನ ಜಗಳ ಬಿಡಿಸುವ ಪಂಚಾಯಿತಿ ಕೆಲಸ ಮಾಡುವುದು ಕೃಷ್ಣ ಅವರಂತಹ ಹಿರಿಯ ಮತ್ತು ವಿವಾದಾತೀತ ನಾಯಕನಿಗೆ ಉಳಿದವರಿಗಿಂತ ಸುಲಭ.
ಈ ಮೂಲಕ ಪಕ್ಷಕ್ಕೆ ತುರ್ತಾಗಿ ಬೇಕಾಗಿರುವ ಒಗ್ಗಟ್ಟನ್ನು ಮೂಡಿಸಲು ಸಾಧ್ಯ.
ನಾಲ್ಕನೆಯದಾಗಿ ಕೃಷ್ಣ ಅವರ ಜಾತಿ. ಬಿಜೆಪಿಯ ಬೆಂಬಲಕ್ಕಿರುವ ಲಿಂಗಾಯತ ಮತಗಳನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಪಡಬೇಕಾಗಿಲ್ಲ. ಆ ಕೆಲಸವನ್ನು ಮಾಡಲು ಆಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಿದ್ಧತೆ ಪ್ರಾರಂಭಿಸಿದ್ದಾರೆ. ಇನ್ನೊಂದು ಎದುರಾಳಿ ಪಕ್ಷವಾದ ಜೆಡಿ(ಎಸ್) ಬೆಂಬಲಕ್ಕಿರುವ ಒಕ್ಕಲಿಗರ ಮತಗಳನ್ನು ಒಡೆದು ಸೆಳೆಯುವಂತಹ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ.
ಕೃಷ್ಣ ಅವರು ಪ್ರಶ್ನಾತೀತ ಒಕ್ಕಲಿಗ ನಾಯಕರಲ್ಲದೆ ಇದ್ದರೂ ಆ ಕೆಲಸವನ್ನು ತಮ್ಮ ಮಿತಿಯಲ್ಲಿಯೇ ಅವರು ಮಾಡಬಲ್ಲರು. ಕಾಂಗ್ರೆಸ್ ಪಕ್ಷದೊಳಗಿರುವ ಬಹಳಷ್ಟು ಅತೃಪ್ತ ಲಿಂಗಾಯತ ನಾಯಕರಿಗೂ ಎಸ್.ಎಂ.ಕೃಷ್ಣ ಆಪ್ತರು. ಅವರಲ್ಲಿ ಬಹಳಷ್ಟು ಮಂದಿ  ಶಾಮನೂರು ಶಿವಶಂಕರಪ್ಪನವರನ್ನು ಕೈಬಿಟ್ಟು ಕೃಷ್ಣ ಅವರನ್ನು ಸ್ವಾಗತಿಸಲು ಹೂವಿನ ಹಾರ ಹಿಡಿದುಕೊಂಡು ನಿಂತಿದ್ದಾರೆ.
ಮೇಲ್ನೋಟಕ್ಕೆ ಇವೆಲ್ಲವೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ನೆರವಾಗಬಲ್ಲಂತಹ ಅನುಕೂಲಗಳಂತೆ ಕಾಣುತ್ತಿವೆ. ಆದರೆ ಈ ನಾಲ್ಕು ಅನುಕೂಲತೆಗಳನ್ನು ಇನ್ನೊಂದು ಮಗ್ಗುಲಿನಿಂದ ನೋಡಿದರೆ ಇವು ಹೊಸ ಸಮಸ್ಯೆಗಳಾಗಿ ಕಾಣುತ್ತವೆ.
ಮೊದಲನೆಯದಾಗಿ ಕೃಷ್ಣ ಹೊಂದಿರುವ ಮತ್ತು ಮನುಷ್ಯ ಪ್ರಯತ್ನದ ಮೂಲಕ ಬದಲಾಯಿಸಲಾಗದ ಅನಾನುಕೂಲತೆ ಅವರ ವಯಸ್ಸು. ಅವರು 80 ವರ್ಷ ಪೂರ್ಣಗೊಳಿಸಿ 81ಕ್ಕೆ ಕಾಲಿಟ್ಟಿದ್ದಾರೆ. ಒಬ್ಬ ವ್ಯಕ್ತಿಯ `ಇಮೇಜ್~ನಲ್ಲಿ ವಯಸ್ಸಿನ ಪಾತ್ರವೂ ಇದೆ. ಜನಸಂಖ್ಯೆಯಲ್ಲಿ ಶೇಕಡಾ 65ರಷ್ಟಿರುವ 35 ವರ್ಷಗಳೊಳಗಿನ ಯುವಜನರು 80 ವರ್ಷದ ನಾಯಕನನ್ನು ಆತ ಎಷ್ಟೇ ಸಮರ್ಥನಾಗಿದ್ದರೂ ಒಪ್ಪಿಕೊಳ್ಳುತ್ತಾರೆಯೇ? ಉದ್ಯಮ ಕ್ಷೇತ್ರಗಳ ನಾಯಕರ ಸರಾಸರಿ ವಯಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ನಿಧಾನವಾಗಿಯಾದರೂ ಈ ಬದಲಾವಣೆ ರಾಜಕೀಯದಲ್ಲಿಯೂ ಪ್ರಾರಂಭವಾಗಿದೆ. ಉತ್ತರಪ್ರದೇಶದಲ್ಲಿ ಮುಲಾಯಂಸಿಂಗ್ ತನ್ನ ಮಗನನ್ನು ಮುಖ್ಯಮಂತ್ರಿ ಮಾಡಿಬಿಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಂಜಾಬ್ ಮತ್ತು ತಮಿಳುನಾಡಿನಲ್ಲಿ ಈಗಿನ ಆಡಳಿತ ಪಕ್ಷಗಳೇ ಪುನರಾಯ್ಕೆಯಾದರೂ ಮುಖ್ಯಮಂತ್ರಿ ಸ್ಥಾನದಲ್ಲಿ ತಂದೆಯ ಬದಲಿಗೆ ಮಕ್ಕಳು ಕೂರಬಹುದು.
ಮಹಾರಾಷ್ಟ್ರ, ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳೆಲ್ಲ 60 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವರು. ಕೃಷ್ಣ ಅವರ ಪಕ್ಷವೇ ಯುವನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲು ಹೊರಟಿದೆ.
ಈ ಪರಿಸ್ಥಿತಿಯಲ್ಲಿ ಎಂಬತ್ತು ದಾಟಿದ ಕೃಷ್ಣ ಅವರು ಪಾಂಚಜನ್ಯ ಊದಿದರೆ ಎಷ್ಟು ಮಂದಿ ಯುವಕ-ಯುವತಿಯರು ಓಡಿಬರಬಹುದು?ಎರಡನೆಯದಾಗಿ, 1999ರಲ್ಲಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಮೊದಲ ಬಾರಿಗೆ ಕೂತಾಗ ಅವರು ಹೊಂದಿದ್ದ `ಕ್ಲೀನ್ ಇಮೇಜ್~ ಈಗಲೂ ಇದೆ ಎಂದು ಹೇಳುವುದು ಕಷ್ಟ. ತಮ್ಮ ಆಡಳಿತ ಭ್ರಷ್ಟಚಾರ ಮುಕ್ತವಾಗಿತ್ತು ಎಂದು ಹೇಳುವ ಎದೆಗಾರಿಕೆ ಕೃಷ್ಣ ಅವರಿಗೂ ಇರಲಾರದು. 
ನೈಸ್ ಹಗರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅವರನ್ನು ಆರೋಪಿಯನ್ನಾಗಿ ಮಾಡಿರುವುದು ಇತ್ತೀಚಿನ ಘಟನೆ. ಅವರ ಅಧಿಕಾರಾವಧಿಯ ಕಾಲದಲ್ಲಿಯೇ ಅಕ್ರಮ ಗಣಿಗಾರಿಕೆಯ ಅಧ್ಯಾಯ ಪ್ರಾರಂಭವಾಗಿದ್ದು. ಕಾಲ ಬದಲಾಗಿದೆ, ಸಾಮಾನ್ಯ ಜನರು ಹಿಂದಿನಷ್ಟು ಅಸಹಾಯಕರಲ್ಲ. ಅವರ ಕೈಗೆ ಸಿಕ್ಕಿರುವ ಮಾಹಿತಿ ಹಕ್ಕು ಕಾಯಿದೆಯ ಅಸ್ತ್ರ ಮತ್ತು ದಿನದಿಂದ ದಿನಕ್ಕೆ ತೀವ್ರತೆ ಪಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧದ ಹೋರಾಟ ಎಂತಹ ಪ್ರಾಮಾಣಿಕ ರಾಜಕಾರಣಿಯ ಎದೆಯಲ್ಲಿಯೂ ದಿಗಿಲು ಹುಟ್ಟಿಸುವಂತಿದೆ.

ಈಗಿನ ಹೋರಾಟ ಆಟದ ನಿಯಮಗಳನ್ನು ಬದಲಿಸಿಬಿಟ್ಟಿದೆ. ರಾಜಕಾರಣಿಗಳ ಮಕ್ಕಳು ಮಾತ್ರವಲ್ಲ ಅಳಿಯಂದಿರ ಬಂಡವಾಳ ಕೂಡಾ ಬಯಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಐದು ದಶಕಗಳ ಕಾಲ ದೀರ್ಘ ರಾಜಕೀಯ ಮಾಡಿ ಅಧಿಕಾರದ ಹಲವಾರು ಸ್ಥಾನಮಾನಗಳನ್ನು ಅನುಭವಿಸಿರುವ ಕೃಷ್ಣ ಅವರ `ಕ್ಲೀನ್ ಇಮೇಜ್~ನ ಕೋಟೆಯನ್ನು ಒಡೆದುಹಾಕಲು ರಾಜಕೀಯ ವಿರೋಧಿಗಳು ಖಂಡಿತ ಪ್ರಯತ್ನ ನಡೆಸಬಹುದು.
ಕೃಷ್ಣ ಒಬ್ಬ ಉತ್ತಮ ಆಡಳಿತಗಾರನೆನ್ನುವ ಖ್ಯಾತಿಯ ಜತೆಯಲ್ಲಿ, ಅವರ ಅಭಿವೃದ್ಧಿಯ ಮುನ್ನೋಟ  ನಗರ ಕೇಂದ್ರಿತವಾಗಿತ್ತು ಎಂಬ ಆರೋಪ ಕೂಡಾ ಇದೆ. ಬೆಂಗಳೂರು ನಗರವನ್ನು `ಸಿಲಿಕಾನ್ ಸಿಟಿ~ಯಾಗಿ ಬೆಳೆಸಲು ತೋರಿದ ಆಸಕ್ತಿಯನ್ನು ಅವರು ಗ್ರಾಮೀಣ ಅಭಿವೃದ್ಧಿಗಾಗಿ ತೋರಿಸಲಿಲ್ಲ ಎಂದು ದೂರುವವರಿದ್ದಾರೆ. ಅ
ವರ ಕಾಲದಲ್ಲಿ ಕಾಣಿಸಿಕೊಂಡ ಬರಗಾಲವನ್ನು ಎದುರಿಸಲು ವಿಫಲವಾಗಿದ್ದು ಕೂಡಾ ಕಾಂಗ್ರೆಸ್ ಸೋಲಿಗೆ ಕಾರಣ ಎನ್ನುವವರಿದ್ದಾರೆ. ಈ ದೇಶದಲ್ಲಿ ನಗರಕೇಂದ್ರಿತ ಅಭಿವೃದ್ಧಿಯ ಪೂರ್ವಗ್ರಹ ಹೊಂದಿರುವವರು ಚುನಾವಣೆಯಲ್ಲಿ ಯಶಸ್ಸು ಕಂಡದ್ದು ಕಡಿಮೆ. ಇದಕ್ಕೆ ಉದಾಹರಣೆಯಾಗಿ ಡಾ. ಮನಮೋಹನ್‌ಸಿಂಗ್ ಅವರನ್ನೇ ಉಲ್ಲೇಖಿಸಬಹುದು.
ಶರದ್ ಪವಾರ್ ತನ್ನ ವಿರುದ್ಧದ ಭ್ರಷ್ಟಾಚಾರದ ನೂರೆಂಟು ಆರೋಪಗಳ ಹೊರತಾಗಿಯೂ ರಾಜಕೀಯವಾಗಿ ಇಂದಿಗೂ ಯಶಸ್ಸು ಕಾಣಲು ಸಾಧ್ಯವಾಗಿರುವುದು ಗ್ರಾಮಕೇಂದ್ರಿತ ಅಭಿವೃದ್ಧಿ ಯೋಜನೆಗಳಿಂದಾಗಿ. ಎಚ್.ಡಿ. ದೇವೇಗೌಡರು  ಬಹಳ ಜಾಣತನದಿಂದ `ಮಣ್ಣಿನ ಮಗ~ ಎಂಬ ಬಿರುದನ್ನು ಕಾಪಾಡಿಕೊಂಡು ಬಂದ ಕಾರಣದಿಂದಾಗಿಯೇ ಈಗಲೂ ರಾಜಕೀಯವಾಗಿ ಪ್ರಸ್ತುತವಾಗಿ ಉಳಿದಿದ್ದಾರೆ.
 ನಗರದ ಮತದಾರರು ಕೃಷ್ಣ ಅವರಂತಹ ರಾಜಕಾರಣಿಗಳ ಬಗ್ಗೆ ಒಲವು ಹೊಂದಿರಬಹುದು. ಆದರೆ ನಗರ ಪ್ರದೇಶದಲ್ಲಿ ಚಲಾವಣೆಯಾಗುವ ಮತಗಳ ಪ್ರಮಾಣ ಎಷ್ಟು? ನಗರದ ಮತದಾರರಲ್ಲಿ ಅಷ್ಟೊಂದು ರಾಜಕೀಯ ಜಾಗೃತಿ ಹೊಂದಿದ್ದರೆ, ಜಾತಿ, ದುಡ್ಡು ಮೊದಲಾದ ದೌರ್ಬಲ್ಯಗಳು ಅವರಲ್ಲಿ ಇಲ್ಲವೆಂದಾದರೆ ಬೆಂಗಳೂರು ಪದವೀಧರ ಮತದಾರ ಕ್ಷೇತ್ರದಲ್ಲಿ ಅಶ್ವಿನ್ ಮಹೇಶ್ ಅವರಂತಹ ನಗರಪ್ರೇಮಿ, ಶಿಕ್ಷಿತ, ಜಾಗೃತ ಅಭ್ಯರ್ಥಿ ಸೋತು ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಮಚಂದ್ರಗೌಡರಂತಹವರು ಗೆಲ್ಲಲು ಹೇಗೆ ಸಾಧ್ಯ?
ಮೂರನೆಯದಾಗಿ ಕೃಷ್ಣ ಅವರ ಆಗಮನದಿಂದ ರಾಜ್ಯ ಕಾಂಗ್ರೆಸ್‌ನಲ್ಲಿರುವ ಒಳಜಗಳ ಶಮನವಾಗಲಿದೆ ಎಂದು ಆ ಪಕ್ಷದಲ್ಲಿರುವ ಕಡು ಆಶಾವಾದಿಗಳು ನಂಬಿದ್ದಾರೆ. 2008ರಲ್ಲಿ ಇದೇ ಕೆಲಸಕ್ಕಾಗಿ ಕೃಷ್ಣ ಅವರನ್ನು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕಕ್ಕೆ ಕಳುಹಿಸಿತ್ತೆನ್ನುವುದನ್ನು ಅವರು ಮರೆತುಬಿಟ್ಟಿದ್ದಾರೆ.
ಆದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯನವರ ಗುಂಪುಗಳ ನಡುವಿನ ಒಳಜಗಳ ಬಗೆಹರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲಿಲ್ಲ, ಆ ಜಗಳ ಕಾಂಗ್ರೆಸ್ ಸೋಲಿನಲ್ಲಿಯೇ ಕೊನೆಗೊಂಡದ್ದು. ಆಗ ಮಾಡಲಾಗದ ಪವಾಡವನ್ನು ಕೃಷ್ಣ ಈಗ ಮಾಡುತ್ತಾರೆ ಎನ್ನುವುದಕ್ಕೆ ಖಾತರಿ ಏನಿದೆ?  ತಮ್ಮ ಮಹತ್ವಾಕಾಂಕ್ಷೆಯ ಈಡೇರಿಕೆಗೆ ಕೃಷ್ಣ ನೆರವಾಗಬಹುದು ಎನ್ನುವ ವಿಶ್ವಾಸ ಇರುವವರೆಗೆ ಪರಮೇಶ್ವರ್ ಇಲ್ಲವೇ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇರಬಹುದು.

ಆ ವಿಶ್ವಾಸ ಕಳೆದುಕೊಂಡ ಮರುಕ್ಷಣ ಅವರಿಬ್ಬರೂ ಇಲ್ಲವೇ ಅವರಲ್ಲೊಬ್ಬರು ತಿರುಗಿಬೀಳಬಹುದು. ಈ ಇಬ್ಬರು ಕಾಂಗ್ರೆಸ್ ನಂಬಿಕೊಂಡ ಮತಬ್ಯಾಂಕ್‌ನಲ್ಲಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಗೆ ಸೇರಿದವರು. ಕೃಷ್ಣ ತಂದುಕೊಡುವ ಒಕ್ಕಲಿಗರ ಮತಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಲಿತ-ಹಿಂದುಳಿದ ಜಾತಿಗಳ ಮತಗಳನ್ನು ಕಾಂಗ್ರೆಸ್ ಕಳೆದುಕೊಳ್ಳುವಂತಾದರೆ ಲಾಭಕ್ಕಿಂತ ನಷ್ಟ ಹೆಚ್ಚಾಗಬಹುದು.
ಈ ಕಾರಣಗಳಿಂದಾಗಿಯೇ ಒಂದು ಕೋನದಲ್ಲಿ ರಾಜ್ಯ ಕಾಂಗ್ರೆಸ್ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರದಂತೆ ಕಾಣುವ ಎಸ್.ಎಂ. ಕೃಷ್ಣ ಇನ್ನೊಂದು ಕೋನದಲ್ಲಿ ಸಮಸ್ಯೆಯಂತೆ ಕಾಣುತ್ತಿರುವುದು.