Thursday, March 7, 2013

ಸುಭದ್ರ ಸರ್ಕಾರಕ್ಕೆ ಪ್ರಬುದ್ಧ ಆಶೀರ್ವಾದ

ಬೆಂಗಳೂರು: ಉತ್ತರಪ್ರದೇಶದಲ್ಲಿ ಬೀಸಿರುವ ಬದಲಾವಣೆಯ ಬಿರುಗಾಳಿ ಬಹುಜನ ಸಮಾಜ ಪಕ್ಷವನ್ನು ಕೆಡವಿಹಾಕಿದೆ, ಭಾರತೀಯ ಜನತಾ ಪಕ್ಷ ತಲೆ ಎತ್ತದಂತೆ ಮಾಡಿದೆ, ಕಾಂಗ್ರೆಸ್ ಪಕ್ಷವನ್ನು ಒಂದಿಷ್ಟು ಮುಂದಕ್ಕೆ ತಳ್ಳಿ ಕೈಬಿಟ್ಟಿದೆ ಮತ್ತು ಸಮಾಜವಾದಿ ಪಕ್ಷದ ನಾಯಕ ಮುಲಾಯಂಸಿಂಗ್ ಯಾದವ್ ಅವರನ್ನೆತ್ತಿ ಮುಖ್ಯಮಂತ್ರಿ ಸಿಂಹಾಸನದ ಮೇಲೆ ಕೊಂಡೊಯ್ದು ಕೂರಿಸಿದೆ.
ಉತ್ತರಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ನಿರೀಕ್ಷೆಯಂತೆಯೇ ಬಂದಿದ್ದರೂ `ತ್ರಿಶಂಕು ವಿಧಾನಸಭೆ~ ನಿರ್ಮಾಣವಾಗಬಹುದೆಂಬ ಭವಿಷ್ಯವನ್ನು ಮಾತ್ರ ಆ ರಾಜ್ಯದ ಮತದಾರರು ಸುಳ್ಳಾಗಿಸಿದ್ದಾರೆ. ಯಾರ ಹಂಗಿಗೂ ಬೀಳದೆ ಸ್ವಂತಬಲದಿಂದ ಸರ್ಕಾರ ರಚಿಸುವಷ್ಟು ಬಹುಮತವನ್ನು ಸಮಾಜವಾದಿ ಪಕ್ಷಕ್ಕೆ ನೀಡಿದ್ದಾರೆ. ಈ ಮೂಲಕ ಸುಭದ್ರ ಸರ್ಕಾರ ಬೇಕೆಂಬ ಆಶಯವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿ ಪ್ರಬುದ್ಧತೆಯನ್ನು ಮೆರೆದಿದ್ದಾರೆ. ಸಮಾಜವಾದಿ ಪಕ್ಷವನ್ನು `ರಿಮೋಟ್ ಕಂಟ್ರೋಲ್~ ಮೂಲಕ ನಿಯಂತ್ರಿಸಬಹುದೆಂಬ ಕಾಂಗ್ರೆಸ್ ಪಕ್ಷದ ದೂರದ ಆಲೋಚನೆಯನ್ನು ವಿಫಲಗೊಳಿಸಿದ್ದಾರೆ.
ಈ ಚುನಾವಣಾ ಫಲಿತಾಂಶ ತಕ್ಷಣದಲ್ಲಿ ರಾಷ್ಟ್ರರಾಜಕಾರಣದ ಮೇಲೆ ಪ್ರಭಾವ ಬೀರದೆ ಇದ್ದರೂ ನಿಧಾನವಾಗಿ ಮತ್ತೊಂದು ಸುತ್ತಿನ ಧ್ರುವೀಕರಣಕ್ಕೆ ಚಾಲನೆ ನೀಡಲೂಬಹುದು.ಮಹತ್ವಾಕಾಂಕ್ಷಿ ಮುಲಾಯಂಸಿಂಗ್ ಯಾದವ್ ರಾಜ್ಯರಾಜಕಾರಣಕ್ಕಷ್ಟೇ ತಮ್ಮನ್ನು ಕಟ್ಟಿಹಾಕಿಕೊಳ್ಳದೆ ಮತ್ತೆ ತೃತೀಯರಂಗವನ್ನು ಕಟ್ಟುವ ಮತ್ತು ಆ ಮೂಲಕ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತುದಿಗಾಲಲ್ಲಿ ನಿಲ್ಲಿಸುವ ಪ್ರಯತ್ನ ಮಾಡಬಹುದು. ಜುಲೈ ತಿಂಗಳಿನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆ ಹಾಗೂ ಮುಂದಿನ ವರ್ಷ ಕೆಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ತೃತೀಯರಂಗದ ಶಕ್ತಿಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಬಹುದು.
ಸಮಾಜವಾದಿ ಪಕ್ಷಕ್ಕೆ ಗೆಲುವು ನಿರೀಕ್ಷಿತವಾದರೂ ಅದರ ಪ್ರಮಾಣ ಅದನ್ನು ಅಚ್ಚರಿಗೀಡುಮಾಡಿರಲೂ ಬಹುದು. ಕಳೆದ ಹತ್ತುವರ್ಷಗಳಲ್ಲಿ ಸಮಾಜವಾದಿ ಪಕ್ಷ ಸೋತರೂ-ಗೆದ್ದರೂ ಮತಪ್ರಮಾಣ ಮಾತ್ರ ಶೇಕಡಾ 25ರಿಂದ ಕೆಳಗಿಳಿದಿರಲಿಲ್ಲ. ಅಪ್ಪ ಗಟ್ಟಿಗೊಳಿಸಿದ್ದ ಹಳೆಬೇರಿಗೆ ಹೊಸ ಚಿಗುರಿನ ರೂಪದಲ್ಲಿ ಜತೆಯಾದ ಮಗ ಅಖಿಲೇಶ್ ಯಾದವ್ ಪಕ್ಷ ಹಿಂದೆಂದೂ ಕಾಣದಂತಹ ಅಭೂತಪೂರ್ವ ಗೆಲುವನ್ನು ತಂದುಕೊಟ್ಟಿದ್ದಾರೆ.
ಇದಕ್ಕೆ ಕಾರಣಗಳು ಹಲವಾರು. ಹಾದಿ ತಪ್ಪಿಹೋಗಿದ್ದ ಮುಲಾಯಂಸಿಂಗ್ ತನ್ನನ್ನು ತಿದ್ದಿಕೊಂಡು ಮತ್ತೆ ಹಳೆಯ `ನೇತಾಜಿ~ ಆಗಿಬಿಟ್ಟರು. ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ಸಿಂಗ್ ಅವರನ್ನು ಜತೆಯಲ್ಲಿ ಸೇರಿಸಿಕೊಂಡ ಕಾರಣಕ್ಕೆ ದೂರ ಹೋಗಿದ್ದ ಮುಸ್ಲಿಮರನ್ನು ಒಲಿಸಿಕೊಂಡು ಅವರು ಮರಳಿ ಕರೆತಂದರು. ಮಾಯಾವತಿ ಅವರಿಂದ ಅವಗಣನೆಗೊಳಗಾಗಿರುವ ರೈತಸಮುದಾಯದ ನಿಜವಾದ ಹಿತರಕ್ಷಕ ಎಂದು ಬಿಂಬಿಸುವ ಮೂಲಕ ಅವರೂ ತಮ್ಮನ್ನು ಹಿಂಬಾಲಿಸುವಂತೆ ಮಾಡಿದರು.
ಅಪ್ಪನ ಪ್ರಯತ್ನಕ್ಕೆ ಜತೆ ನೀಡಿದ ಮಗ ಅಖಿಲೇಶ್ ಕುಖ್ಯಾತ ಕ್ರಿಮಿನಲ್‌ಗಳಿಗೆ ಟಿಕೆಟ್ ನಿರಾಕರಿಸುವ ಮೂಲಕ ತಮ್ಮ ಪಕ್ಷಕ್ಕಂಟಿದ್ದ `ಗೂಂಡಾಗಿರಿ~ಯ ಕಳಂಕವನ್ನು ತೊಡೆದುಹಾಕಿದರು.ಇಂಗ್ಲೀಷ್ ಶಿಕ್ಷಣ ಮತ್ತು ಕಂಪ್ಯೂಟರ್ ಬಗ್ಗೆ ಪಕ್ಷದ ಪುರಾತನ ಆಲೋಚನೆಯನ್ನು ಬದಲಾಯಿಸಿ ಪಕ್ಷಕ್ಕೆ ಆಧುನಿಕ ಕಾಲಕ್ಕೆ ಹೊಂದುವ ಚಹರೆ ನೀಡಿದರು. ಅಭಿವೃದ್ಧಿಯ ಅಜೆಂಡಾವನ್ನು ಚರ್ಚೆಗೊಡ್ಡುವ ಜತೆಯಲ್ಲಿ ಜಾತಿಯನ್ನು ಮೀರಿ ರಾಜಕೀಯ ಮಾಡುವ ಸಂದೇಶ ನೀಡಿ ಯುವ ಮತದಾರರನ್ನು ಆಕರ್ಷಿಸಿದರು. ಹೊಸಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜವಾದಿ ಪಕ್ಷವನ್ನು ಬೆಂಬಲಿಸುವಂತೆ ನೋಡಿಕೊಂಡರು.
 ಮಾಯಾವತಿ ಸೋಲು ಅವರಿಗೆ ಅನಿರೀಕ್ಷಿತವಾದರೂ ಅವರ ರಾಜಕೀಯ ಮತ್ತು ಆಡಳಿತವನ್ನು ಗಮನಿಸುತ್ತಾ ಬಂದವರಿಗೆ ನಿರೀಕ್ಷಿತವಾಗಿತ್ತು. ಆದರೆ ಉತ್ತರಪ್ರದೇಶದ ಮತದಾರರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ತಮ್ಮನ್ನು ಸೋಲಿಸುತ್ತಾರೆ ಎಂದು ಆಕೆ ನಿರೀಕ್ಷಿಸಿರಲಿಕ್ಕಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಹುಜನಸಮಾಜ ಪಕ್ಷ ಮೇಲ್ಜಾತಿ ವಿರುದ್ಧದ ತನ್ನ ನಿಲುವನ್ನು ಕೈಬಿಟ್ಟು ನಡೆಸಿದ ಬ್ರಾಹ್ಮಣಜೋಡೊ ಕಾರ್ಯಕ್ರಮದ ರಾಜಕೀಯ ಲಾಭ ಆ ಪಕ್ಷಕ್ಕೆ ಆಗಿತ್ತು. ಆದರೆ ಈ `ಅವಸರದ ಕ್ರಾಂತಿ~ 5 ವರ್ಷಗಳ ಅವಧಿಯಲ್ಲಿಯೇ ವಿಫಲಗೊಂಡಿದೆ. ದಲಿತರು ಮತ್ತು ಬ್ರಾಹ್ಮಣರ ನಡುವೆ ಘರ್ಷಣೆಗಳು ಪ್ರಾರಂಭವಾಗಿದ್ದವು.
ಇದರಿಂದಾಗಿ, ಬಿಎಸ್‌ಪಿ ತೆಕ್ಕೆಗೆ ಬಂದಿದ್ದ `ಅತಿಥಿ~ಗಳು ಹೊರಟು ಹೋದಂತಿದೆ. ಚುನಾವಣೆ ಸಮೀಪಿಸುತ್ತಿರುವಾಗಲೇ ಪಕ್ಷವನ್ನು ಶುಚಿಗೊಳಿಸಲು ಹೊರಟ ಮಾಯಾವತಿ ಅವರು 23 ಸಚಿವರನ್ನು ವಜಾಮಾಡಿದ್ದು ಮತ್ತು ಸುಮಾರು 100 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು ದೊಡ್ಡ ಮಟ್ಟದಲ್ಲಿ ರಾಜಕೀಯ ಹಾನಿ ಮಾಡಿದೆ. ಇದರಿಂದಾಗಿ ಭುಗಿಲೆದ್ದ ಭಿನ್ನಮತವನ್ನು ಎದುರಿಸುವ ಸಿದ್ಧತೆಯಾಗಲಿ, ಅದಕ್ಕೆ ಬೇಕಾದಷ್ಟು ಸಮಯವಾಗಲಿ ಅವರಲ್ಲಿ ಇರಲಿಲ್ಲ. 
ದಮನಕ್ಕೊಳಗಾದ ದಲಿತರಿಗೆ ರಕ್ಷಣೆ ಮತ್ತು ಆತ್ಮಗೌರವವನ್ನೇನೋ ಮಾಯಾವತಿ ತಂದುಕೊಟ್ಟರು. ಆದರೆ ಅದರ ನಂತರ ಏನು ಎಂಬ ಪ್ರಶ್ನೆಗೆ ಅವರಲ್ಲಿಯೂ ಉತ್ತರ ಇರಲಿಲ್ಲ. ಹದಿನಾರು ವರ್ಷಗಳ ಕಾಲ ಬಿಹಾರದಲ್ಲಿ ಲಾಲುಪ್ರಸಾದ್ ಅವರನ್ನು ಬೆಂಬಲಿಸಿದ ಅಲ್ಲಿನ ಮತದಾರರು ಕೊನೆಗೆ ಕೈಬಿಟ್ಟದ್ದು ಇದೇ ಕಾರಣಕ್ಕಾಗಿ. ಸಾಮಾಜಿಕ ಭದ್ರತೆ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ದಲಿತರಿಗೆ ನೀಡಿದ ಮಾಯಾವತಿ  ದಲಿತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಪ್ರಯತ್ನ ಮಾಡಲೇ ಇಲ್ಲ. ಇದರ ಬದಲಿಗೆ ಅಂಬೇಡ್ಕರ್ ಉದ್ಯಾನ ಮತ್ತು ಪ್ರತಿಮೆಗಳ ಸ್ಥಾಪನೆಗಾಗಿ ಖರ್ಚುಮಾಡಿದ ಸಾವಿರಾರು ಕೋಟಿ ರೂಪಾಯಿ ದಲಿತೇತರರಲ್ಲಿ ಮಾತ್ರವಲ್ಲ ದಲಿತರಲ್ಲಿಯೂ ಅಸಮಾಧಾನ ಮೂಡಿಸಿರಬಹುದು.
ಭಾರತೀಯ ಜನತಾ ಪಕ್ಷ ಫಲಿತಾಂಶದ ಚುನಾವಣೆಗೆ ಮೊದಲೇ ಸೋಲನ್ನು ಒಪ್ಪಿಕೊಂಡಿರುವ ಸ್ಥಿತಿಯಲ್ಲಿತ್ತು. ಕಳೆದೆರಡು ದಶಕಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಕೋಮುವಾದದ ಬಣ್ಣ ಬಳಿಯಲು ಹೋಗದೆ ಸಂಯಮ ತೋರಿ ಬಿಜೆಪಿಯನ್ನು ಬಲ್ಲವರೆಲ್ಲರನ್ನೂ ಅಚ್ಚರಿಗೀಡುಮಾಡಿತ್ತು. ಇದರಿಂದಾಗಿ ಸಾಮಾನ್ಯವಾಗಿ ಬಿಜೆಪಿ ಪ್ರಚಾರಕ್ಕೆ ಹಿಮ್ಮೇಳದಂತೆ ಜತೆ ನೀಡುತ್ತಾ ಬಂದಿದ್ದ ಸಾಧು-ಸಂತರೂ ದೂರ ಉಳಿದು ಬಿಟ್ಟರು. ಗೆಲ್ಲುವ ಯಾವ ಕಾರ್ಯತಂತ್ರವೂ ಆ ಪಕ್ಷದಲ್ಲಿರಲಿಲ್ಲ.
ಉತ್ತರಪ್ರದೇಶದ ತನ್ನ ಎರಡನೆ ಹುಟ್ಟೂರು ಎಂದೇ ಹೇಳುತ್ತಿದ್ದ ಅಟಲ ಬಿಹಾರಿ ವಾಜಪೇಯಿ ಹಾಸಿಗೆಯಿಂದ ಎದ್ದು ಬರುವ ಸ್ಥಿತಿಯಲ್ಲಿರಲಿಲ್ಲ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಬರುವುದು ಅವರ ಪಕ್ಷದ ಕೆಲವರಿಗೆ ಬೇಕಿರಲಿಲ್ಲ. ಲಾಲ್‌ಕೃಷ್ಣ ಅಡ್ವಾಣಿ ಎಲ್ಲರ ನಾಯಕರಾಗಿ ಉಳಿದಿಲ್ಲ. ನಾಯಕಿಯಾಗಿ ಪ್ರಚಾರದಲ್ಲಿ ತೊಡಗಿದರೂ ಉಮಾ ಭಾರತಿಯವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಔದಾರ್ಯವನ್ನು ಪಕ್ಷದ ನಾಯಕರು ತೋರಲಿಲ್ಲ. ಮಧ್ಯಪ್ರದೇಶವನ್ನು ಬಿಟ್ಟು ಬರುವ ಮನಸ್ಸು ಅವರಿಗೂ ಇರಲಿಲ್ಲ. ಆದುದರಿಂದ ಗಂಭೀರ ರಾಜಕಾರಣದಲ್ಲಿ ತೊಡಗಿರುವ ಪಕ್ಷ ತಮ್ಮದು ಎಂಬ ಅಭಿಪ್ರಾಯವನ್ನು ಜನರಲ್ಲಿ ಮೂಡಿಸಲು ಅದಕ್ಕೆ ಸಾಧ್ಯವಾಗಲಿಲ್ಲ. ಇದರಿಂದಾಗಿ ಅಧಿಕಾರದಲ್ಲಿ ಇಲ್ಲದೆ ಇದ್ದರೂ ಬಿಜೆಪಿಯ ಸದಸ್ಯ ಬಲ ಮತ್ತು ಮತಪ್ರಮಾಣ ಕಡಿಮೆಯಾಗಿದೆ.
ರಾಹುಲ್‌ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಮೂಲಕ ಬೆಂಬಲಿಗರ ನಿರೀಕ್ಷೆ ಗಗನಕ್ಕೇರುವಂತೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದಕ್ಕೆ ತಕ್ಕ ಸಾಧನೆಯನ್ನು ಮಾಡಿ ತೋರಿಸಲಾಗಲಿಲ್ಲ. ತನ್ನ ಸದಸ್ಯಬಲವನ್ನು ದುಪ್ಪಟ್ಟು ಮಾಡಿಕೊಳ್ಳುವ ಜತೆಯಲ್ಲಿ ಮತಪ್ರಮಾಣವನ್ನು ಹೆಚ್ಚಿಸಿಕೊಂಡರೂ ಉತ್ತರಪ್ರದೇಶದ ರಾಜಕೀಯವನ್ನು ಪ್ರತ್ಯಕ್ಷ ಇಲ್ಲವೇ ಪರೋಕ್ಷವಾಗಿ ನಿಯಂತ್ರಿಸುವಷ್ಟು ಶಕ್ತಿಯನ್ನು ಗಳಿಸಿಕೊಳ್ಳಲಿಕ್ಕೆ ಸಾಧ್ಯವಾಗಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಯಿಂದ ಪ್ರಾರಂಭವಾದ ಪಕ್ಷದ ಬಲವರ್ಧನೆಯ ಪ್ರಕ್ರಿಯೆ ಈ ಚುನಾವಣೆಯಲ್ಲಿಯೂ ಮುಂದುವರಿದಿದೆ. ಇದು ಮತಪ್ರಮಾಣದಲ್ಲಿನ ಹೆಚ್ಚಳದಲ್ಲಿ ವ್ಯಕ್ತವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 320 ಕ್ಷೇತ್ರಗಳಲ್ಲಿ ಠೇವಣಿಯನ್ನು ಕಳೆದುಕೊಂಡಿದ್ದ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ದೊಡ್ಡಪ್ರಮಾಣದ ಮತಗಳು ಬೇಕಿತ್ತು. ಆ ಪ್ರಮಾಣದಲ್ಲಿ ಮತ ಬಂದಿಲ್ಲ.
ಕಾಂಗ್ರೆಸ್ ಹಿನ್ನಡೆಗೆ 22 ವರ್ಷಗಳ ರಾಜಕೀಯ ವನವಾಸದಿಂದಾಗಿ ದುರ್ಬಲಗೊಂಡಿರುವ ಪಕ್ಷದ ಸಂಘಟನೆಯೂ ಕಾರಣ.  ಮುಲಾಯಂಸಿಂಗ್ ಯಾದವ್ ಮತ್ತು ಮಾಯಾವತಿ ಅವರಿಗೆ ಎದುರಾಗಿ ಬಲಿಷ್ಠವಾದ ಸ್ಥಳೀಯ ನಾಯಕತ್ವವನ್ನು ಬಿಂಬಿಸಲು ಸಾಧ್ಯವಾಗದೆ ಇರುವುದು ಕೂಡಾ ಕಾಂಗ್ರೆಸ್ ಪಕ್ಷದ ದೌರ್ಬಲ್ಯ.
ಮುಸ್ಲಿಮರನ್ನು ಓಲೈಸುವ ಉದ್ದೇಶದಿಂದ ಚುನಾವಣಾ ಪೂರ್ವದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಮಾಡಿದ ಘೋಷಣೆ ಮತ್ತು ಪ್ರಚಾರ ಕಾಲದಲ್ಲಿ ಅದನ್ನು ಬಳಸಿಕೊಂಡ ರೀತಿ ಕೂಡಾ ಆ ಪಕ್ಷಕ್ಕೆ ತಿರುಗುಬಾಣವಾಗಿ ಹೋಯಿತು. ಪ್ರಿಯಾಂಕಾಗಾಂಧಿ ಪ್ರಚಾರ ಮಾಧ್ಯಮದ ಗಮನ ಸೆಳೆದರೂ ಅಮೇಠಿ ಮತ್ತು ರಾಯಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿಯೂ ಪಕ್ಷಕ್ಕೆ ಗೆಲುವು ತಂದುಕೊಡಲಾಗಲಿಲ್ಲ.  2014ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿಯವರಿಗೆ ಫಲಿತಾಂಶ ಉತ್ತೇಜನ ನೀಡುವಂತಹದ್ದಲ್ಲ.
ಚುನಾವಣಾ ಫಲಿತಾಂಶದಲ್ಲಿಯೇ ರಾಜಕಾರಣದ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗುವುದಿಲ್ಲ. ಮುಲಾಯಂಸಿಂಗ್  ನಿಜಕ್ಕೂ ಬದಲಾಗಿದ್ದಾರೆಯೇ? ಚುನಾವಣೆಯಲ್ಲಿನ ಸೋಲು ಮಾಯಾವತಿಯವರಲ್ಲಿ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿದೆಯೇ? ಕೋಮುವಾದಿ ರಾಜಕೀಯದಿಂದ ಅಂತರ ಕಾಯ್ದುಕೊಳ್ಳುವ ಈಗಿನ ನಿರ್ಧಾರಕ್ಕೆ ಬಿಜೆಪಿ ಬದ್ಧವಾಗಿ ಉಳಿಯಲಿದೆಯೇ? ಆಕ್ರಮಣಕಾರಿ ರಾಜಕೀಯವನ್ನು ಪ್ರಾರಂಭಿಸಿರುವ ಕಾಂಗ್ರೆಸ್ ಪಕ್ಷ ರಚನಾತ್ಮಕ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸಲಿದೆಯೇ?- ಇವೆಲ್ಲವೂ ಮುಂದಿನ ದಿನಗಳಲ್ಲಿ ಕೇಳಿಬರಲಿರುವ ಹೊಸ ಪ್ರಶ್ನೆಗಳು.

No comments:

Post a Comment