Monday, April 8, 2013

ರಾಹುಲ್ ಗಾಂಧಿ ಕಳೆದುಕೊಳ್ಳುತ್ತಿರುವ ಅವಕಾಶ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದೆ ಏದುಸಿರು ಬಿಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಅನುಭವ ಹೊಸದೇನಲ್ಲ. ವಿವಾದವೇ ಇಲ್ಲದೆ  ಚುನಾವಣಾ ಅಭ್ಯರ್ಥಿಗಳ ಆಯ್ಕೆ ಸುಸೂತ್ರವಾಗಿ ನಡೆದ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿ  ಇಲ್ಲ. ಟಿಕೆಟ್‌ಗಾಗಿ ಬಹಿರಂಗವಾಗಿ ನಡೆಯುತ್ತಿರುವ ಕಾದಾಟ, ಗುಟ್ಟಾಗಿ ನಡೆಯುವ ಮಸಲತ್ತು, ಪ್ರತಿಭಟನೆ, ಬಂಡಾಯ, ವಶೀಲಿ, ಆಮಿಷ, ಪ್ರಭಾವ, ಕಣ್ಣೀರು, ಜೈಕಾರ, ಧಿಕ್ಕಾರ ...ಇವೆಲ್ಲವೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯ ಭಾಗವೇ ಆಗಿಬಿಟ್ಟಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ಕಾಲದಲ್ಲಿ ದೆಹಲಿಯ ಸರ್ಕಾರಿ ಭವನಗಳು, ಹೊಟೇಲ್‌ಗಳು ತುಂಬಿ ತುಳುಕಾಡುವುದು, ಸೋನಿಯಾಗಾಂಧಿ ಮನೆ ಮತ್ತು ಎಐಸಿಸಿ ಕಚೇರಿಗಳಿರುವ ಜನಪಥ ಮತ್ತು ಅಕ್ಬರ್ ರಸ್ತೆ ತುಂಬಾ ಜನಜಂಗುಳಿ ಎಲ್ಲವೂ ಸಾಮಾನ್ಯ ದೃಶ್ಯ. ಆದರೆ ಈ ಬಾರಿ ಹೀಗಾಗಲಿಕ್ಕಿಲ್ಲ ಎಂದು ತಿಳಿದುಕೊಂಡಿದ್ದ ಒಂದಷ್ಟು ಕಡು ಆಶಾವಾದಿಗಳಿದ್ದರು.
ಇತ್ತೀಚೆಗೆ ಹಲವಾರು ವೇದಿಕೆಗಳಲ್ಲಿ ಕಾಂಗ್ರೆಸ್ ಪಕ್ಷದ ನೂತನ ಉಪಾಧ್ಯಕ್ಷ ರಾಹುಲ್‌ಗಾಂಧಿಯವರು ಮಾತನಾಡಿದ ಆದರ್ಶ ರಾಜಕಾರಣದ ಮಾತುಗಳು ಈ ಆಶಾವಾದಕ್ಕೆ ಕಾರಣ. `ರಾಜಕೀಯ ಅಧಿಕಾರದ ಹಿಂದೆ ಓಡಬೇಡಿ, ಅದು ಪಾಷಾಣ' ಎಂದು ರಾಹುಲ್ ಜೈಪುರ ಚಿಂತನಾ ಶಿಬಿರದಲ್ಲಿ ಎಚ್ಚರಿಸಿದ್ದರು. ಅಲ್ಲಿ ಅವರು ಆಡಿದ ಮಾತುಗಳು ದೇಶದ ಅಮಾಯಕ ಜನರನ್ನು ರೋಮಾಂಚನಗೊಳಿಸಿದ್ದು ಮಾತ್ರವಲ್ಲ ಕಡು ನಿರಾಶವಾದಿಗಳಲ್ಲಿ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಹಿಂದಿನ ಮಾತುಗಳ ಮುಂದುವರಿಕೆಯಂತೆ ನಂತರದ ದಿನಗಳಲ್ಲಿ ಮಾತನಾಡಿದ ರಾಹುಲ್ `ಹೈಕಮಾಂಡ್ ಸಂಸ್ಕೃತಿಯನ್ನು ಕೊನೆಗೊಳಿಸಬೇಕು' ಎಂದಿದ್ದರು. ಕೊನೆಯದಾಗಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಾರಂಭವಾಗುವಾಗ  `ಅಭ್ಯರ್ಥಿಗಳ ಆಯ್ಕೆ ಸ್ಥಳೀಯ ಮಟ್ಟದಲ್ಲಿಯೇ ನಡೆಯುತ್ತದೆ, ಯಾರೂ ದೆಹಲಿಗೆ ಬರುವ ಅಗತ್ಯ ಇಲ್ಲ' ಎಂದಿದ್ದರು. ಇವೆಲ್ಲವನ್ನು ಹೇಳಿದ ರಾಹುಲ್‌ಗಾಂಧಿಯ ನಾಲಗೆಯ ಪಸೆ ಆರುವುದರೊಳಗಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಅಸಹ್ಯ ಪ್ರದರ್ಶನ ಯಥಾ ಪ್ರಕಾರ ಪ್ರಾರಂಭವಾಗಿತ್ತು.
ರಾಹುಲ್‌ಗಾಂಧಿಯವರಂತೆ, ಅವರ ಅಮ್ಮನೂ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಂಡ ಪ್ರಾರಂಭದ ದಿನಗಳಲ್ಲಿ ಇಂತಹದ್ದೇ ಆದರ್ಶ ರಾಜಕಾರಣದ ಮಾತುಗಳನ್ನಾಡಿದ್ದು ಮಾತ್ರವಲ್ಲ ಬದಲಾವಣೆಯ ಪ್ರಯತ್ನಕ್ಕೂ ಕೈಹಾಕಿದ್ದರು. ಅಟಲಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ 1999ರಲ್ಲಿ ಎರಡನೇ ಬಾರಿ ಲೋಕಸಭಾ ಚುನಾವಣೆ ಗೆದ್ದಾಗ ಸೋನಿಯಾಗಾಂಧಿ ಕಂಗಾಲಾಗಿದ್ದರು. ಸೀತಾರಾಂ ಕೇಸರಿಯವರನ್ನು ಕೆಳಗಿಳಿಸಿ ಪಕ್ಷದ ಅಧ್ಯಕ್ಷರಾದ ಸೋನಿಯಾ ನಾಯಕತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 119 ಸ್ಥಾನಗಳನ್ನು ಗಳಿಸಿದ್ದ ಕಾಲ ಅದು. ಸೋಲಿಗೆ ಕಾರಣಗಳನ್ನು ಹುಡುಕಿ ಗೆಲುವಿಗೆ ದಾರಿ ತೋರಿಸಲು ಎ.ಕೆ.ಆಂಟನಿ ನೇತೃತ್ವದ 19 ಸದಸ್ಯರ ಸಮಿತಿಯೊಂದನ್ನು ಸೋನಿಯಾಗಾಂಧಿ ರಚಿಸಿದ್ದರು. ಸಮಿತಿ ಸದಸ್ಯರು ಒಂಬತ್ತು ರಾಜ್ಯಗಳಲ್ಲಿ  ಕಾಲ ಓಡಾಡಿ ಅಭಿಪ್ರಾಯ ಸಂಗ್ರಹಿಸಿದ್ದರು. 40 ದಿನಗಳ ಅಧ್ಯಯನದ ನಂತರ ಆಂಟನಿ ಸಮಿತಿ 200 ಪುಟಗಳ ವರದಿಯನ್ನು ಪಕ್ಷದ ಅಧ್ಯಕ್ಷರಿಗೆ ಸಲ್ಲಿಸಿದ್ದರು. ಈ ವರದಿಯನ್ನು ಗೌಪ್ಯವಾಗಿಡುವ ಉದ್ದೇಶದಿಂದ ಅದರ ಒಂದು ಪ್ರತಿಯನ್ನು ಮಾತ್ರ ಮಾಡಲಾಗಿತ್ತಂತೆ. (ಯಾಕೆ ಈ ರಹಸ್ಯವೊ ಗೊತ್ತಿಲ್ಲ) ಸೋನಿಯಾಗಾಂಧಿ ಮತ್ತು ಕೆಲವು ಆಪ್ತರನ್ನು ಹೊರತುಪಡಿಸಿದರೆ ಅದನ್ನು ನೋಡಿದವರೂ ಇಲ್ಲ. ದೆಹಲಿಯಲ್ಲಿರುವಾಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರೊಬ್ಬರ ಕೈಯಲ್ಲಿದ್ದ ವರದಿ ಮೇಲೆ ಕಣ್ಣಾಡಿಸಿದ್ದ ನನ್ನ ನೆನಪಿನ ಪ್ರಕಾರ ಅದರ ಕೆಲವು ಮುಖ್ಯಾಂಶಗಳು ಹೀಗಿವೆ:
-ಚುನಾವಣೆಗೆ ಅಭ್ಯರ್ಥಿಗಳನ್ನು ಮೂರು ತಿಂಗಳ ಮೊದಲೇ ಆಯ್ಕೆ ಮಾಡಿ ಪ್ರಚಾರಕ್ಕೆ ಅನುಕೂಲ ಮಾಡಿಕೊಡಬೇಕು.
-ಗೆಲುವಿನ ಅವಕಾಶದ ಖಾತರಿ ಇಲ್ಲದೆ ನಾಯಕರ ಪತ್ನಿ ಇಲ್ಲವೆ ಮಕ್ಕಳಿಗೆ ಟಿಕೆಟ್ ನೀಡಬಾರದು.
-ಪಕ್ಷದ ಜಿಲ್ಲಾಸಮಿತಿಗಳು ಶೇಕಡಾ 75ರಷ್ಟು, ಪ್ರದೇಶ ಕಾಂಗ್ರೆಸ್ ಸಮಿತಿ ಶೇಕಡಾ 20ರಷ್ಟು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶೇಕಡಾ ಐದರಷ್ಟು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
-ಚುನಾವಣೆಯ ಪೂರ್ವದಲ್ಲಿ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಾರದು.
-ಪ್ರಚಾರದಲ್ಲಿ ಅಭಿವೃದ್ಧಿಯ ಚರ್ಚೆಗೆ ಮಹತ್ವ ನೀಡಬೇಕು, ಇದಕ್ಕೆ ಅನುಗುಣವಾಗಿ ಚುನಾವಣಾ ತಂತ್ರವನ್ನು ರೂಪಿಸಬೇಕು
-ಸಾಮಾಜಿಕ ಜಾಲತಾಣಗಳ ಮೂಲಕ ಜನಾಭಿಪ್ರಾಯವನ್ನು ಸಂಗ್ರಹಿಸಬೇಕು.
ಇಂತಹ ಮಾನದಂಡಗಳನ್ನು ಶಿಫಾರಸು ಮಾಡಿದ್ದು ಆಂಟನಿ ಸಮಿತಿಯೊಂದೇ ಅಲ್ಲ, 1998ರಲ್ಲಿ ಪಿ.ಎ.ಸಂಗ್ಮಾ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. 2003ರಲ್ಲಿ ರಾಜಸ್ತಾನ, ಮಧ್ಯಪ್ರದೇಶ ಮತ್ತು ಚತ್ತೀಸ್‌ಗಡ ವಿಧಾನಸಭಾ ಚುನಾವಣೆ ಸೋತಾಗ ಪ್ರಣಬ್ ಮುಖರ್ಜಿ ಅಧ್ಯಕ್ಷತೆಯ ಸಮಿತಿ ವರದಿಯನ್ನು ನೀಡಿತ್ತು. ಮನಮೋಹನ್‌ಸಿಂಗ್, ಕರುಣಾಕರನ್ ಹೀಗೆ ಪಕ್ಷದ ಹಿರಿಯ ನಾಯಕರೆಲ್ಲ ತಲೆಗೊಂದರಂತೆ ಚುನಾವಣಾ ಸೋಲಿನ ಆತ್ಮಾವಲೋಕನ ಮತ್ತು ಮಾನದಂಡಗಳ ಪಾಲನೆ ಬಗ್ಗೆ ವರದಿಗಳನ್ನು ನೀಡಿದ್ದರು. 2012ರಲ್ಲಿ ಉತ್ತರಪ್ರದೇಶ, ಪಂಜಾಬ್, ಗೋವಾ, ಚತ್ತೀಸ್‌ಗಡಗಳಲ್ಲಿ ಪಕ್ಷ ಪರಾಭವಗೊಂಡ ನಂತರ ಆಂಟನಿ ನೇತೃತ್ವದ ಸಮಿತಿ ವರದಿಯನ್ನು ನೀಡಿತ್ತು. ಇವೆಲ್ಲವೂ 1999ರ ಆಂಟನಿ ವರದಿಯ ಮಾದರಿಯಲ್ಲಿಯೇ ಇವೆ. ಗೆಲುವಿನ ಕಾರ್ಯತಂತ್ರ, ಸೋಲಿನ ಆತ್ಮಾವಲೋಕನ, ಮಾನದಂಡ-ನೀತಿ ಸಂಹಿತೆಗಳ ವರದಿಗಳಿಗೇನು ಕಾಂಗ್ರೆಸ್ ಪಕ್ಷದಲ್ಲಿ ಬರ ಇಲ್ಲ.
`ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿಗಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು, ದೆಹಲಿಗೆ ಬರಬಾರದು ...ಇತ್ಯಾದಿ ಬುದ್ದಿಮಾತುಗಳನ್ನು ಆಂಟನಿ ವರದಿಯ ದೂಳು ಕೊಡವಿದ ನಂತರವೇ ರಾಹುಲ್‌ಗಾಂಧಿ ಹೇಳಿರುವುದು. ಇದನ್ನು ಪಾಲಿಸುವವರು ಯಾರು? ಪಾಲಿಸುವಂತೆ ಮಾಡುವವರು ಯಾರು?
ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣಾ ಸಮಿತಿಗಳಲ್ಲದೆ ಹಿರಿಯ ನಾಯಕರ ನೇತೃತ್ವದಲ್ಲಿ ಪ್ರಾಂತೀಯ ಸಮಿತಿಗಳನ್ನು ಕೂಡಾ ರಚಿಸಿತ್ತು. ಜಿಲ್ಲಾ ಸಮಿತಿ ಅಧ್ಯಕ್ಷರು ಒಂದು ಇಲ್ಲವೆ ಎರಡು ಹೆಸರುಗಳನ್ನು ಮಾತ್ರ ಶಿಫಾರಸು ಮಾಡಬೇಕೆಂದು ತಿಳಿಸಲಾಗಿತ್ತು. ಇಷ್ಟೆಲ್ಲ ಕಸರತ್ತಿನ ನಂತರ ನಡೆದದ್ದು ಮಾತ್ರ ಹಳೆಯ ಪ್ರಹಸನದ ಮರುಪ್ರದರ್ಶನ. ಯಥಾಪ್ರಕಾರ ಬೆಂಬಲಿಗರೊಂದಿಗೆ ನಾಯಕರ ದಂಡು ದೆಹಲಿಗೆ ದಾಳಿ ಹಾರಿತು. ಹೋದವರೆಲ್ಲರೂ ತಮ್ಮ ಸಾಮರ್ಥ್ಯಕ್ಕೆ ಎಟುಕಬಲ್ಲ  ನಾಯಕರನ್ನು ಭೇಟಿ ಮಾಡಿದರು. ಒಂದಷ್ಟು ಮಹಿಳಾ ಆಕಾಂಕ್ಷಿಗಳು ಸೋನಿಯಾ ಮನೆ ಮುಂದೆ ಧರಣಿಯನ್ನೂ ಮಾಡಿದರು. ಇಷ್ಟೆಲ್ಲಾ ನಡೆಯುವಾಗ `ದೆಹಲಿಗೆ ಬರಬೇಡಿ' ಎಂಬ ಆದೇಶ ನೀಡಿದ್ದ ರಾಹುಲ್‌ಗಾಂಧಿ ಎಲ್ಲಿದ್ದರು? ತಮ್ಮ ಆದೇಶ ಉಲ್ಲಂಘಿಸಿದ್ದ ನಾಲ್ಕು ನಾಯಕರಿಗೆ ಟಿಕೆಟ್ ನಿರಾಕರಿಸುವ ಶಿಸ್ತುಕ್ರಮಕೈಗೊಂಡಿದ್ದರೆ ಉಳಿದವರು ಕರ್ನಾಟಕಕ್ಕೆ ಓಡಿಬರುತ್ತಿದ್ದರು. ಇದನ್ನೆಲ್ಲ ನೋಡಿದ ಟಿಕೆಟ್ ವಂಚಿತ ಯುವ ಅಭ್ಯರ್ಥಿಯೊಬ್ಬ `ನಮ್ಮ ನಾಯಕರ ಮಾತು ಕೇಳಿ ದೆಹಲಿಗೆ ಹೋಗದೆ ಇಲ್ಲಿಯೇ ಇದ್ದು ತಪ್ಪು ಮಾಡಿದೆ. ನನ್ನನ್ನು ವಿರೋಧಿಸಿ ಅಲ್ಲಿಗೆ ಹೋದವರೆಲ್ಲರೂ ಸಂಚು ಮಾಡಿ ಟಿಕೆಟ್ ತಪ್ಪಿಸಿದರು' ಎಂದು ಗೋಳಾಡುತ್ತಿದ್ದ.
2008ರಲ್ಲಿ ಸತತ ಎರಡನೆ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋತಾಗ ಪಕ್ಷದ ಹೈಕಮಾಂಡ್ ಚಿಂತಾಕ್ರಾಂತವಾಗಿತ್ತು. ಆಗಲೂ ಸೋಲಿನ ಕಾರಣಗಳನ್ನು ಹುಡುಕಲು ಎ.ಕೆ.ಆಂಟನಿ ನೇತೃತ್ವದಲ್ಲಿಯೇ ಸಮಿತಿ ರಚಿಸಲಾಗಿತ್ತು. ಬೆಳಕಿಗೆ ಬಾರದ ಈ ವರದಿಯಲ್ಲಿಯೂ `ಕಾಂಗ್ರೆಸ್ ಸೋಲಿಗೆ ಆಂತರಿಕ ಕಚ್ಚಾಟ ಮತ್ತು ಹಿರಿಯ ನಾಯಕರು ಸ್ವಂತ ಕ್ಷೇತ್ರಗಳಲ್ಲಿ ಗೆಲ್ಲಲು ವಿಫಲವಾಗಿದ್ದು ಕಾರಣ' ಎಂಬ ಅಂಶ ಪ್ರಮುಖವಾಗಿ ಉಲ್ಲೇಖವಾಗಿತ್ತಂತೆ. `ಕಾಂಗ್ರೆಸ್ ಸೋಲಿಗೆ ಕಾಂಗ್ರೆಸಿನವರೇ ಸಾಕು, ವಿರೋಧಪಕ್ಷಗಳು ಬೇಕಿಲ್ಲ' ಎನ್ನುವ ವ್ಯಂಗ್ಯೋಕ್ತಿ ರಾಜ್ಯದ ರಾಜಕಾರಣದಲ್ಲಿ ಪ್ರಚಾರದಲ್ಲಿದೆ. ಇದನ್ನು ಸುಳ್ಳೆಂದು ಕಾಂಗ್ರೆಸಿನವರೇ ಹೇಳುವುದಿಲ್ಲ. ಕಳೆದ ವರ್ಷ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಈ ಮಾತನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದರು. 2008ರ ಚುನಾವಣಾ ಕಾಲದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಖರ್ಗೆ ಅವರು ಬಹಿರಂಗವಾಗಿ ಹೇಳಲಾಗದ ಇನ್ನಷ್ಟು ಸತ್ಯಗಳನ್ನು ಬಚ್ಚಿಟ್ಟುಕೊಂಡಿರಬಹುದು.
2008ರ ಕಾಂಗ್ರೆಸ್ ಪಕ್ಷದ ಸೋಲಿಗೆ ದಲಿತ ನಾಯಕನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪರೋಕ್ಷವಾಗಿ ಬಿಂಬಿಸಿದ್ದೂ ಕಾರಣ ಎಂದು ಇಂದಿಗೂ ಹೇಳುವವರಿದ್ದಾರೆ. ಆದರೆ ಆಂಟನಿ ಸಮಿತಿ ಎತ್ತಿರುವ ಪ್ರಶ್ನೆಗಳಿಗೆ ಯಾರೂ ಉತ್ತರ ನೀಡುವುದಿಲ್ಲ. ಕಳೆದ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿದ್ದ 34 ಮಾಜಿ ಸಚಿವರು ಸೋಲು ಅನುಭವಿಸಿದ್ದರು ಎನ್ನುವುದನ್ನು ಬಹಳ ಮಂದಿ ಮರೆತೇ ಬಿಟ್ಟಿದ್ದಾರೆ. ಸೋಲಿನ ಸರದಾರರ ಪಟ್ಟಿಯಲ್ಲಿ ಎನ್.ಧರ್ಮಸಿಂಗ್, ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಎಚ್.ವಿಶ್ವನಾಥ್, ಅಂಬರೀಷ್, ಎಚ್.ಸಿ.ಶ್ರಿಕಂಠಯ್ಯ, ಡಿ.ಬಿ.ಚಂದ್ರೇಗೌಡ, ಎಂ.ಪಿ.ಪ್ರಕಾಶ್, ಕಾಗೋಡು ತಿಮ್ಮಪ್ಪ, ವಸಂತ್ ವಿ.ಸಾಲ್ಯಾನ್,ಎಂ.ವೈ ಮೇಟಿ, ಕೆ.ಬಿ.ಕೋಳಿವಾಡ್, ಶ್ರಿನಿವಾಸಗೌಡ ಮೊದಲಾದವರ ಹೆಸರುಗಳಿವೆ. ಇವರಲ್ಲಿ ಒಂದಷ್ಟು ಮಂದಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳೂ ಆಗಿದ್ದರು. ಇವರಲ್ಲಿ ಹತ್ತು ನಾಯಕರು ಗೆದ್ದುಬಿಟ್ಟಿದ್ದರೂ ರಾಜ್ಯದ ರಾಜಕೀಯ ಚಿತ್ರವೇ ಬದಲಾಗಿರುತ್ತಿತ್ತು. ಬೇರೆ ಕ್ಷೇತ್ರಗಳಿಗೆ ಹೋಗಿ ಪ್ರಚಾರಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದ್ದ ಈ ನಾಯಕರನ್ನು ಅವರ ಕ್ಷೇತ್ರಗಳಲ್ಲಿ ಗೆಲ್ಲಿಸಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪ್ರಚಾರಕ್ಕೆ ಹೋಗಬೇಕಿತ್ತೇ? ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ `ಕಾಲೆಳೆಯುವ ರಾಜಕಾರಣ' ಕೂಡಾ ಕಾರಣ ಎನ್ನುವುದನ್ನು ಆಂಟನಿ ಗುರುತಿಸಿದ್ದಾರೆ. ಹಲವಾರು ನಾಯಕರು ಪಕ್ಷದಲ್ಲಿರುವ ತಮ್ಮ ವಿರೋಧಿಗಳನ್ನು ಸೋಲಿಸಲು ವಿರೋಧಪಕ್ಷಗಳ ಅಭ್ಯರ್ಥಿಗೆ ಹಣಕಾಸು ನೆರವು ನೀಡಿದ್ದ ಪ್ರಕರಣಗಳನ್ನು ಕೂಡಾ ಪಕ್ಷದ ಹಿರಿಯ ನಾಯಕರು ಆಂಟನಿ ಅವರ ಗಮನಕ್ಕೆ ತಂದಿದ್ದರು. ಆದರೆ ಯಾರ ತಲೆಯೂ ಉರುಳಲಿಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಹಾಕಿದ ಆರೋಪ ಹೊತ್ತವರಿಗೆ ಟಿಕೆಟ್ ನೀಡಿದ ನಂತರ ಯಾವ ತಲೆ ಉರುಳಲು ಸಾಧ್ಯ?
ತಾನು ಕನಸು ಕಾಣುತ್ತಿರುವ ಆದರ್ಶ ರಾಜಕಾರಣವನ್ನು ಕಾರ್ಯರೂಪಕ್ಕೆ ತರಲು ರಾಹುಲ್‌ಗಾಂಧಿ ಈ ಬಾರಿ ಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಬಹುದಿತ್ತು. ಅಂತಹದ್ದೊಂದು ಅಪೂರ್ವ ಅವಕಾಶ ಕೂಡಿ ಬಂದಿತ್ತು. ಇತ್ತೀಚಿನ ಎಲ್ಲ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಬಹುಮತ ಗಳಿಸಬಹುದೆಂಬ ಭವಿಷ್ಯ ನುಡಿಯುತ್ತಿವೆ.  `ರಾಜಕೀಯ ಆತ್ಮಹತ್ಯೆ' ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ಪಕ್ಷವೊಂದು `ರಿಸ್ಕ್'ತೆಗೆದುಕೊಳ್ಳಲು ಸಾಧ್ಯವಾಗುವುದೇ ಇಂತಹ ಅನುಕೂಲಕರ ಪರಿಸ್ಥಿತಿಯಲ್ಲಿ. ಅಷ್ಟೇನು ಜನಪ್ರಿಯರಲ್ಲದ, ಜಾತಿ ಮತ್ತು ದುಡ್ಡಿನ ಬಲ ಇಲ್ಲದ, ಸಜ್ಜನ, ಪ್ರಾಮಾಣಿಕ, ಕಳಂಕರಹಿತ ಮತ್ತು ಸೇವಾಸಕ್ತ ವ್ಯಕ್ತಿಗಳನ್ನು ಗುರುತಿಸಿ ಟಿಕೆಟ್‌ನೀಡಲು ಇದೊಂದು ಅವಕಾಶ. ಪಕ್ಷದ ಜನಪ್ರಿಯತೆಯ ಅಲೆಯ ಮೇಲೇರಿ ಇಂತಹವರು ಗೆಲುವಿನ ದಡ ಸೇರುವ ಸಾಧ್ಯತೆ ಇರುತ್ತದೆ. ಮುಳುಗುತ್ತಿರುವ ಹಡಗಿನಂತಾಗಿರುವ ಬಿಜೆಪಿ ಇಂತಹ ದಿಟ್ಟತನದ ರಾಜಕೀಯ ನಿರ್ಧಾರವನ್ನು ತೋರಿಸುವ ಸ್ಥಿತಿಯಲ್ಲಿ ಇಲ್ಲ.  ಆದರೆ ಈಗಾಗಲೇ ಬಿಡುಗಡೆಗೊಂಡಿರುವ ಅಭ್ಯರ್ಥಿಗಳ ಪಟ್ಟಿ ಮತ್ತು ಅದರ ಬೆನ್ನಲ್ಲಿಯೇ ಎದ್ದಿರುವ ವಿವಾದಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷ ರಾಹುಲ್‌ಗಾಂಧಿ ತೋರುತ್ತಿರುವ ದಾರಿಯನ್ನು ಬಿಟ್ಟು ಹಳೆಯ ದಾರಿಯಲ್ಲಿಯೇ ಸಾಗುವ ಹಾಗೆ ಕಾಣುತ್ತಿದೆ. ಇಷ್ಟೆಲ್ಲ ಅವಾಂತರಗಳ ನಂತರವೂ ಕಾಂಗ್ರೆಸ್ ಪಕ್ಷವೇ ಚುನಾವಣೆಯಲ್ಲಿ ಬಹುಮತ ಗಳಿಸಬಹುದು, ಆ ಪಕ್ಷವೇ ಸರ್ಕಾರ ರಚಿಸಬಹುದು. ಆದರೆ ಪಕ್ಷ ಗೆದ್ದರೂ ಕೂಡ ಪ್ರಧಾನಮಂತ್ರಿಯಾಗಲು ಹೊರಟ ರಾಹುಲ್‌ಗಾಂಧಿಯ ಆದರ್ಶದ ಸೋಲು ಆಗಲಿದೆ.

Sunday, March 31, 2013

ಮುಲಾಯಂ ಮುಲಾಮಿನಿಂದ ಎದ್ದು ನಿಂತ ಅಡ್ವಾಣಿ

ತೃತೀಯ ರಂಗದ ಗಂಟೆ ಆಗಾಗ ಮೊಳಗಿ ಸುಮ್ಮನಾಗುವುದು ರೂಢಿಯಾಗಿಬಿಟ್ಟಿರುವ ಕಾರಣದಿಂದಾಗಿ
ಯೇ ಇದನ್ನು ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಲೇವಡಿ ಮಾಡುತ್ತಿವೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂಸಿಂಗ್ ಗ್ಯಾಂಗ್ ತೃತೀಯರಂಗದ ಗಾಳಿಪಟವನ್ನು ಎಷ್ಟು ಎತ್ತರಕ್ಕೆ ಹಾರಿಸಿದರೂ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾದರೆ ಕೆಳಗೆ ಇಳಿದುಬಂದು ನಮ್ಮ ಮನೆಬಾಗಿಲು ಬಡಿಯಲೇಬೇಕು ಎನ್ನುವುದು ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಗೊತ್ತಿದೆ.
ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸಮಾನ ದೂರದಲ್ಲಿಟ್ಟು ನಿಜವಾದ ತೃತೀಯ ರಂಗ ಅಧಿಕಾರಕ್ಕೆ ಬರುವ ರಾಜಕೀಯ ವಾತಾವರಣ ಸದ್ಯಕ್ಕೆ ದೇಶದಲ್ಲಿ ಇಲ್ಲ. ಅಂದ ಮಾತ್ರಕ್ಕೆ ಪ್ರಾದೇಶಿಕ ರಾಜಕಾರಣದ `ಚಾಣಕ್ಯ' ಮುಲಾಯಂಸಿಂಗ್ ಹಾಗೆ ಸುಮ್ಮನೆ ತೃತೀಯರಂಗದ ಗಂಟೆ ಆಡಿಸುವವರೂ ಅಲ್ಲ. ಯುಪಿಎಗೆ ಪರ್ಯಾಯವಾಗಿ ಎನ್‌ಡಿಎಯನ್ನು ಬಲಪಡಿಸುವ ಉದ್ದೇಶವೇನಾದರೂ ಅವರಲ್ಲಿದೆಯೇ? ಇದನ್ನೇ ಬಳಸಿಕೊಂಡು ಮೋದಿಯವರನ್ನು ಪಕ್ಕಕ್ಕೆ ಸರಿಸಿ ಅಡ್ವಾಣಿ ಅವರನ್ನು ಮೇಲಕ್ಕೆತ್ತುವ ತಂತ್ರವನ್ನು ಮೋದಿ ವಿರೋಧಿ ಬಿಜೆಪಿ ನಾಯಕರು ಹೆಣೆಯುತ್ತಿದ್ದಾರೆಯೇ?
ಇದೇ ಅಂಕಣದಲ್ಲಿ ಹಿಂದೆ ಹಲವಾರು ಬಾರಿ ಚರ್ಚಿಸಿದಂತೆ ತತ್ವಾಧಾರಿತವಾದ ನೈಜ ತೃತೀಯರಂಗ ದೆಹಲಿ ಗದ್ದುಗೆ ಏರಲು ಇನ್ನೂ ರಾಜಕೀಯ ಕಾಲ ಪಕ್ವವಾಗಿಲ್ಲ. ಯಾವುದೇ ಪಕ್ಷ ಇಲ್ಲವೇ ಮೈತ್ರಿಕೂಟ ಕೇಂದ್ರದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆಬರಲು ಕನಿಷ್ಠ 272 ಸದಸ್ಯರ ಬೆಂಬಲ ಬೇಕು.
1952ರಿಂದ 2009ರ ವರೆಗಿನ ಹದಿನೈದು ಲೋಕಸಭಾ ಚುನಾವಣೆಗಳ ಇತಿಹಾಸವನ್ನು ಅವಲೋಕಿಸಿದರೆ 1977ರ ಚುನಾವಣೆಯೊಂದನ್ನು ಹೊರತುಪಡಿಸಿ ಬೇರೆ ಯಾವುದರಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ (1980ರ ಮೊದಲು ಜನಸಂಘ)ಯೇತರ ಪಕ್ಷಗಳ  ಒಟ್ಟು ಸಂಖ್ಯಾಬಲ 272ರ ಸಮೀಪಕ್ಕೂ ಬಂದಿಲ್ಲ. (1977ರಲ್ಲಿ ಜನಸಂಘ ಆಗಿನ ಜನತಾಪಕ್ಷದಲ್ಲಿ ವಿಲೀನಗೊಂಡಿತ್ತು ಎನ್ನುವುದನ್ನೂ ಗಮನಿಸಬೇಕಾಗಿದೆ.) ಕಾಂಗ್ರೆಸ್ ಮತ್ತು ಬಿಜೆಪಿಯ ಒಟ್ಟು ಬಲ ಎಂದೂ 272ಕ್ಕಿಂತ ಕೆಳಗೆ ಇಳಿದಿಲ್ಲ. ಕನಿಷ್ಠ ಬಲ ಎಂದರೆ 1989ರಲ್ಲಿ ಈ ಎರಡು ಪಕ್ಷಗಳು ಒಟ್ಟಾಗಿ ಗಳಿಸಿದ್ದ 282 ಸ್ಥಾನಗಳು.
1991ರ ಲೋಕಸಭಾ ಚುನಾವಣೆಯನ್ನು ಹೊರತುಪಡಿಸಿದರೆ ಈ ಎರಡು ಪಕ್ಷಗಳು ಅತ್ಯಧಿಕ ಸ್ಥಾನ ಗಳಿಸಿರುವುದು 2009ರ ಚುನಾವಣೆಯಲ್ಲಿ (ಕಾಂಗ್ರೆಸ್ 206+ ಬಿಜೆಪಿ 114= 320), ಅಂದರೆ  ಆ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಹೊರತಾಗಿ ಇತರ ಎಲ್ಲ ಪಕ್ಷಗಳು ಗಳಿಸಿದ್ದ ಒಟ್ಟು ಸ್ಥಾನಗಳು 220 ಮಾತ್ರ.
ಇದನ್ನು ನೋಡಿದರೆ ಬಹುಮತಕ್ಕೆ ಬೇಕಾಗುವ ಸಂಖ್ಯೆ ಗಳಿಸುವುದು ತೃತೀಯರಂಗಕ್ಕೆ ಅಸಾಧ್ಯ ಎಂದು ಮೇಲ್ನೋಟಕ್ಕೆ ಅನಿಸುವುದಿಲ್ಲ ಎನ್ನುವುದು ನಿಜ. ಅಂತರ ಇರುವುದು 40-50 ಸ್ಥಾನಗಳಲ್ಲವೇ? ಅದನ್ನು ಗಳಿಸುವುದು ಅಷ್ಟೇನು ಕಷ್ಟವಾಗಲಾರದು ಎಂದು ಯಾರಾದರೂ ಅಂದುಕೊಳ್ಳಬಹುದು. ಆದರೆ ಇದರಲ್ಲೊಂದು ಒಳ ಲೆಕ್ಕಾಚಾರ ಇದೆ.ಒಂದೊಮ್ಮೆ ತೃತೀಯರಂಗದ ಪಕ್ಷಗಳ ಒಟ್ಟು ಸದಸ್ಯಬಲ 272 ತಲುಪಿದರೂ ಆಗಲೂ ಕಷ್ಟಗಳಿವೆ. ಈ ಪ್ರಾದೇಶಿಕ ಪಕ್ಷಗಳಲ್ಲಿನ ಪರಸ್ಪರ ವಿರೋಧ, ಕಾಂಗ್ರೆಸ್ ಮತ್ತು ಬಿಜೆಪಿ ಬಗ್ಗೆ ಅವುಗಳ ಒಟ್ಟು ವಿರೋಧಕ್ಕಿಂತಲೂ ತೀವ್ರವಾಗಿದೆ. ಉ
ತ್ತರಪ್ರದೇಶದಲ್ಲಿ ಎಸ್-ಬಿಎಸ್‌ಪಿ, ತಮಿಳುನಾಡಿನಲ್ಲಿ ಡಿಎಂಕೆ-ಎಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ಸಿಪಿಎಂ-ತೃಣಮೂಲ ಕಾಂಗ್ರೆಸ್, ಮತ್ತು ಬಿಹಾರದಲ್ಲಿ ಜೆಡಿ(ಯು)-ಆರ್‌ಜೆಡಿ ಪಕ್ಷಗಳು ಎಂದಾದರೂ ಒಂದೇ ಮೈತ್ರಿಕೂಟದಲ್ಲಿ ಸೇರಿಕೊಳ್ಳಲು ಸಾಧ್ಯವೇ?
ರಾಜಕೀಯದ ಈ ಗಣಿತ ಗೊತ್ತಿಲ್ಲದಷ್ಟು ಮುಲಾಯಂಸಿಂಗ್ ದಡ್ಡರಲ್ಲ. ಅವರ ತಲೆಯಲ್ಲಿ ಬೇರೆ ರಾಜಕೀಯ ಲೆಕ್ಕಾಚಾರ ಸುಳಿದಾಡುತ್ತಿರುವ ಹಾಗೆ ಕಾಣುತ್ತಿದೆ. ತೃತೀಯರಂಗದ ಬಗ್ಗೆ ಚರ್ಚೆ ಪ್ರಾರಂಭಿಸಿದ ಬೆನ್ನಲ್ಲೇ ಅವರು ಬಿಜೆಪಿ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವುದು ಅವರ ನಡೆ-ನುಡಿಯನ್ನು ಅನುಮಾನದಿಂದ ನೋಡುವಂತೆ ಮಾಡಿದೆ.ಬಿಜೆಪಿ ಮತ್ತು ಅದರ ಪೂರ್ವಾಶ್ರಮದ ರೂಪವಾದ ಜನಸಂಘ ತನ್ನ ಬಲಪಂಥೀಯ ತತ್ವವನ್ನು ಬಹಿರಂಗವಾಗಿಯೇ ಪ್ರತಿಪಾದಿಸುತ್ತಾ ಬಂದಿದ್ದರೂ ಕಾಂಗ್ರೆಸೇತರ ವಿರೋಧ ಪಕ್ಷಗಳು ಆ ಕಾರಣಕ್ಕಾಗಿಯೇ ಅದನ್ನು ಎಂದೂ ದೂರ ಇಟ್ಟಿರಲಿಲ್ಲ.
1977ರಲ್ಲಿ ಜನಸಂಘ, ಜನತಾಪಕ್ಷದ ಜತೆ ವಿಲೀನಗೊಂಡಿದ್ದರೆ 1989ರಲ್ಲಿ ವಿ.ಪಿ.ಸಿಂಗ್ ನೇತೃತ್ವದ ರಾಷ್ಟ್ರೀಯ ರಂಗದಲ್ಲಿ ಬಿಜೆಪಿ ಮಾತ್ರವಲ್ಲ ಎಡಪಕ್ಷಗಳು ಕೂಡಾ ಸೇರಿಕೊಂಡಿದ್ದವು.ಆದರೆ ಬಾಬರಿ ಮಸೀದಿಯ ಧ್ವಂಸದ ಘಟನೆ ದೇಶದ ರಾಜಕಾರಣದ ಸಮೀಕರಣವನ್ನೇ ಬದಲಾಯಿಸಿಬಿಟ್ಟಿತು. ಕಾಂಗ್ರೆಸ್ ಮಾತ್ರವಲ್ಲ ಕಾಂಗ್ರೆಸೇತರ ಪಕ್ಷಗಳು ಕೂಡಾ ಬಿಜೆಪಿಯನ್ನು ತಮ್ಮ ಗುಂಪಿಗೆ ಸೇರಿಸಿಕೊಳ್ಳದೆ ದೂರ ಇಟ್ಟುಬಿಟ್ಟಿವೆ. ಅದರ ನಂತರದ ದಿನಗಳಲ್ಲಿಯೇ ದೇಶದ ರಾಜಕಾರಣದಲ್ಲಿ `ಕೋಮುವಾದ' ಮತ್ತು `ಜಾತ್ಯತೀತ' ನೆಲೆಯ ಧ್ರುವೀಕರಣ ಪ್ರಾರಂಭವಾಗಿದ್ದು.
ಈ `ರಾಜಕೀಯ ಅಸ್ಪೃಶ್ಯತೆ'ಯಿಂದ ತನ್ನನ್ನು ಮುಕ್ತಗೊಳಿಸಲು ಬಿಜೆಪಿ ಪ್ರಯತ್ನ ಮಾಡುತ್ತಲೇ ಬಂದಿದೆ. ಇದರ ಫಲಸ್ವರೂಪವೇ  ಎನ್‌ಡಿಎ ರಚನೆ. ಸಮಾಜವಾದಿ ಜಾರ್ಜ್ ಫರ್ನಾಂಡಿಸ್ ಮತ್ತು ನಿತೀಶ್‌ಕುಮಾರ್, ದ್ರಾವಿಡ ಪಕ್ಷಗಳ ಜಯಲಲಿತಾ ಮತ್ತು ಕರುಣಾನಿಧಿಯವರಿಂದ  ದಲಿತ ನಾಯಕ ರಾಮ್‌ವಿಲಾಸ್ ಪಾಸ್ವಾನ್ ವರೆಗೆ ಎಲ್ಲರನ್ನೂ ಜತೆಯಲ್ಲಿ ಸೇರಿಸಿಕೊಂಡಿದ್ದು ಇದೇ ಪ್ರಯತ್ನದ ಭಾಗವಾಗಿತ್ತು.
ಬಹುಜನ ಸಮ್ಮತ ಮುಖ ವಾಜಪೇಯಿ ಅವರನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸಿದ ಈ ಪ್ರಯತ್ನವನ್ನು ಮತ್ತೆ ಭಂಗಗೊಳಿಸಿದವರು ನರೇಂದ್ರಮೋದಿ. ಬಾಬರಿ ಮಸೀದಿ ಧ್ವಂಸದ ಕಳಂಕ ನಿಧಾನವಾಗಿ ಅಳಿಸಿಹೋಗುತ್ತಿದ್ದಾಗ ಮತ್ತೆ ಬಿಜೆಪಿಯ ಮುಖಕ್ಕೆ ಕೋಮುವಾದದ ಮಸಿ ಬಳಿದವರು ಮೋದಿ. 2002ರಲ್ಲಿ ಗುಜರಾತ್‌ನಲ್ಲಿ ನಡೆದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ನಡೆದ ಕೋಮು ಹಿಂಸಾಚಾರದಿಂದಾಗಿ ಬಿಜೆಪಿ ರಾಜಕೀಯವಾಗಿ ಅಸ್ಪೃಶ್ಯವಾಗಿಯೇ ಉಳಿಯುವಂತಾಯಿತು. ಲೋಕಜನಶಕ್ತಿ ಪಕ್ಷ, ತೆಲುಗುದೇಶಂ, ನ್ಯಾಷನಲ್ ಕಾಂಗ್ರೆಸ್ ಮೊದಲಾದ ಪಕ್ಷಗಳು ಎನ್‌ಡಿಎ ತೊರೆದುಹೋಗಲು ಗುಜರಾತ್ ಗಲಭೆ ಕಾರಣ.
ಹನ್ನೊಂದು ವರ್ಷಗಳಿಂದ ಈ ಕಳಂಕವನ್ನು ತೊಳೆಯಲು ಬಿಜೆಪಿ ಒದ್ದಾಡುತ್ತಿದೆ. `ಎನ್‌ಡಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ದೇಶದಲ್ಲಿಯಾಗಲಿ ಇತರ ರಾಜ್ಯದಲ್ಲಿಯಾಗಲಿ ಕೋಮುಗಲಭೆಗಳು ನಡೆದಿಲ್ಲ' ಎಂದು ಆ ಪಕ್ಷದ ನಾಯಕರು ಸಾರಿ ಸಾರಿ ಹೇಳುತ್ತಿರುವುದು ಮತ್ತು  ನರೇಂದ್ರಮೋದಿ ಅವರು ಕೋಮುವಾದದ ಬಗ್ಗೆ ಉಸಿರೆತ್ತದೆ ಗುಜರಾತ್‌ನಲ್ಲಿ ನಡೆದಿರುವ ಅಭಿವೃದ್ಧಿ ಚಟುವಟಿಕೆಗಳನ್ನೇ ಪ್ರಸ್ತಾಪಿಸುತ್ತಾ ತಾನೊಬ್ಬ `ವಿಕಾಸ ಪುರುಷ'ನೆಂಬ ರೀತಿಯಲ್ಲಿ ತನ್ನನ್ನು ಬಿಂಬಿಸಿಕೊಳ್ಳುತ್ತಿರುವುದು-ಎಲ್ಲವೂ ಈ `ಆತ್ಮಾವಲೋಕನದ ರಾಜಕಾರಣ'ದ ಚಿತ್ರಕತೆಯ ಭಾಗ.
ಮೋದಿ ಅವರು ತನ್ನಿಂದ ತಪ್ಪಾಗಿದೆ ಎಂದು ತಲೆಕೆಳಗೆ ಕಾಲು ಮೇಲೆ ಮಾಡಿ ದೇಶದ ಜನರ ಕ್ಷಮೆ ಕೇಳಿದರೂ ಜನಸಂಖ್ಯೆಯಲ್ಲಿ ಶೇಕಡಾ 13ರಷ್ಟಿರುವ ಮುಸ್ಲಿಮರು ಅವರನ್ನು ಕ್ಷಮಿಸಲಾರರು. ಈ ಕ್ಷಮೆ ಸಿಗದೆ  ಕಾಂಗ್ರೆಸೇತರ ಪಕ್ಷಗಳು ಬಿಜೆಪಿಯ ಜತೆಗೂಡುವುದು ಕಷ್ಟ. ಆದರೆ ಕಳೆದ ಒಂದು ದಶಕದ ಅವಧಿಯಲ್ಲಿ ಕಾಂಗ್ರೆಸೇತರ ರಾಜಕೀಯ ಪಕ್ಷಗಳ ಒಟ್ಟು ಬಿಜೆಪಿ ವಿರೋಧ ಈಗ ಆ ಪಕ್ಷದ ಒಬ್ಬ ನಾಯಕನಾದ ನರೇಂದ್ರಮೋದಿ ಬಗ್ಗೆಯಷ್ಟೇ ಸೀಮಿತವಾಗಿರುವುದು ವಿಶೇಷ.
ಹಾಗಿದ್ದರೆ ನರೇಂದ್ರಮೋದಿ ಅವರನ್ನು ಕೈಬಿಟ್ಟು ಬೇರೆಯಾರನ್ನಾದರೂ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದರೆ ಬಿಜೆಪಿ ಮನೆಯೊಳಗೆ ಜಾತ್ಯತೀತ ಪಕ್ಷಗಳು ಪ್ರವೇಶಿಸಿ ಅಸ್ಪೃಶ್ಯತೆಯನ್ನು ತೊಲಗಿಸಲು ಸಿದ್ಧ ಇವೆಯೇ? `ಹೌದು' ಎಂದು ಮುಲಾಯಂಸಿಂಗ್ ಯಾದವ್ ಬಾಯಿಬಿಟ್ಟು ಹೇಳುವ ಒಂದು ದಿನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ.
ಬಿಜೆಪಿಯೊಳಗಿನ ಕೆಲವು ನಾಯಕರು ಇಂತಹ ದಿನಕ್ಕಾಗಿಯೇ ಕಾಯುತ್ತಿರುವಂತಿದೆ. ಮೋದಿ ಅಲ್ಲದೆ ಇದ್ದರೆ ಬೇರೆ ಯಾರು ಎನ್ನುವ ಪ್ರಶ್ನೆಗೆ ಉತ್ತರ ಹುಡುಕಲು ಕಷ್ಟಪಡಬೇಕಾಗಿಲ್ಲ. ಆಗಲೇ ಲಾಲ್‌ಕೃಷ್ಣ ಅಡ್ವಾಣಿಯವರು ಎದ್ದು ನಿಂತಿದ್ದಾರೆ. ತುಸು ಬಾಗಿದಂತಿದ್ದ ಅವರ ಬೆನ್ನು ಮುಲಾಯಂ ಹೊಗಳಿಕೆಯ ಮುಲಾಮು ಹಚ್ಚಿದ ಮೇಲೆ ನೆಟ್ಟಗಾಗಿದೆ, ಅವರನ್ನು ಕಾಡುತ್ತಾ ಬಂದಿರುವ ಪ್ರಧಾನಿ ಪಟ್ಟದ ಹಳೆಯ ಕನಸು ಮತ್ತೆ ಚಿಗುರೊಡೆದಿದೆ.
ಆದರೆ ಮುಲಾಯಂಸಿಂಗ್ ಅವರಿಗೆ ಕಾಂಗ್ರೆಸ್ ಬಗ್ಗೆ ಎಷ್ಟೇ ದ್ವೇಷವಿದ್ದರೂ ಆ ಕಾರಣಕ್ಕಾಗಿ ಲಾಲ್‌ಕೃಷ್ಣ ಅಡ್ವಾಣಿಯವರನ್ನು ಪ್ರಧಾನಿ ಮಾಡಲು ಅವರು ಹೊರಡಲಾರರು. ಮೋದಿಯನ್ನು ಕೈಬಿಟ್ಟ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೂ ಪ್ರಧಾನಿ ಪಟ್ಟಕ್ಕೆ ಮುಲಾಯಂಸಿಂಗ್ ಅವರ ಮೊದಲ ಆಯ್ಕೆ ಮುಲಾಯಂಸಿಂಗ್ ಅವರೇ ಎಂಬುದು ಸ್ಪಷ್ಟ.
ಇತ್ತೀಚೆಗೆ ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್‌ಕುಮಾರ್ ಅವರನ್ನು ಯಾಕೆ ಬಿಂಬಿಸಬಾರದು ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವುದು ಕೂಡಾ ಮುಲಾಯಂಸಿಂಗ್ ಯಾದವ್   ಇದ್ದಕ್ಕಿದ್ದಂತೆ ಸಕ್ರಿಯವಾಗಲು ಕಾರಣ ಇರಬಹುದು. ಇದರ ಜತೆಗೆ ಯುಪಿಎ ಮೇಲೆ ಒತ್ತಡ ಹೇರಿ ಕಾರ್ಯ ಸಾಧಿಸಿಕೊಳ್ಳುವ ದುರಾಲೋಚನೆಯೂ ಅವರಲ್ಲಿದ್ದಿರಬಹುದು. ನಿಜವಾಗಿಯೂ ಎನ್‌ಡಿಎ ಜತೆ ಸೇರಿಕೊಳ್ಳುವ ಉದ್ದೇಶ ಮುಲಾಯಂ ಮತ್ತಿತರ ತೃತೀಯರಂಗದ ನಾಯಕರು ಹೊಂದಿದ್ದರೆ ಕಾಂಗ್ರೆಸ್ ಪಕ್ಷದ ನಿದ್ದೆ ಹಾಳಾಗಲಿದೆ.
ಈಗಿನ ಸಂಖ್ಯಾಬಲದ ಹಿನ್ನೆಲೆಯಲ್ಲಿ ಹೇಳುವುದಾದರೆ ತೃತೀಯರಂಗದ ನಾಯಕರೆಲ್ಲರೂ ಒಟ್ಟು ಸೇರಿದರೂ ಯುಪಿಎ ಸರ್ಕಾರವನ್ನು ಉರುಳಿಸಿ ಎನ್‌ಡಿಎ ಅಧಿಕಾರಕ್ಕೆ ಬರುವುದು ಸಾಧ್ಯ ಇಲ್ಲ ಎನ್ನುವುದು ವಾಸ್ತವ. ಇದು ಸಾಧ್ಯವಾಗಬೇಕಾದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ 150ಕ್ಕಿಂತ ಕೆಳಗಿಳಿಯಬೇಕು,ಬಿಜೆಪಿಯ ಬಲ 150ಕ್ಕಿಂತ ಮೇಲೇರಬೇಕು ಮತ್ತು ತೃತೀಯರಂಗದ ಗಂಟೆ ಆಡಿಸುತ್ತಿರುವ ಎಸ್‌ಪಿ, ಟಿಎಂಸಿ,ಡಿಎಂಕೆ ಇಲ್ಲವೆ ಎಡಿಎಂಕೆ,ಬಿಜೆಡಿ, ತೆಲುಗುದೇಶಂ, ಜೆಡಿ (ಎಸ್) ಮೊದಲಾದ ಪಕ್ಷಗಳು ಕನಿಷ್ಠ ಈಗ ಇರುವ ಸಂಖ್ಯಾಬಲವನ್ನಾದರೂ ಉಳಿಸಿಕೊಳ್ಳಬೇಕು. ಅದು ಸಾಧ್ಯವಾದರೆ ಈಗಿನ ಮಿತ್ರಪಕ್ಷಗಳ ಜತೆ ತೃತೀಯ ರಂಗದ ನಾಯಕರ ಬೆಂಬಲವನ್ನೂ ಬಳಸಿಕೊಂಡು ಉಳಿದ 100-120 ಸ್ಥಾನಗಳನ್ನು ಹೊಂದಿಸಿಕೊಳ್ಳುವುದು ಬಿಜೆಪಿಗೆ ಕಷ್ಟವಾಗಲಾರದು. ಅಂತಹ ಸಂದರ್ಭದಲ್ಲಿ ಈಗ ಯುಪಿಎನಲ್ಲಿರುವ ಶರದ್ ಪವಾರ್ ಅವರ ಎನ್‌ಸಿಪಿ, ಅಜಿತ್‌ಸಿಂಗ್ ಅವರ ಆರ್‌ಎಲ್‌ಡಿ  ಕೂಡಾ ಶಿಬಿರ ಬದಲಾಯಿಸಬಹುದು.
ಬದಲಾಗಿರುವಂತೆ ಕಾಣುತ್ತಿರುವ ಮುಲಾಯಂಸಿಂಗ್ ಅವರ ಹೊಗಳಿಕೆಯಲ್ಲಿ ಲಾಲ್‌ಕೃಷ್ಣ ಅಡ್ವಾಣಿಯವರಿಗೆ `ಸುರಂಗದ ಕೊನೆಯಲ್ಲಿನ ಬೆಳಕು' ಕಂಡಿರಲೂಬಹುದು. ಪ್ರಧಾನಿ ಅಭ್ಯರ್ಥಿಯಾಗಲು ತುದಿಗಾಲಲ್ಲಿ ನಿಂತಿರುವ ನರೇಂದ್ರಮೋದಿಯವರನ್ನು ಪಕ್ಕಕ್ಕೆ ತಳ್ಳಿ ತನ್ನ ಬದುಕಿನ ಕೊನೆಯ ಆಸೆಯನ್ನು ಈಡೇರಿಸಿಕೊಳ್ಳಲು ಈ ಅವಕಾಶವನ್ನು ಯಾಕೆ ಬಳಸಿಕೊಳ್ಳಬಾರದು ಎಂಬ ಯೋಚನೆ ಅವರಲ್ಲಿ ಹುಟ್ಟಿರಲೂ ಬಹುದು.
ಮಿತ್ರಪಕ್ಷಗಳಾದ ಜೆಡಿ (ಯು) ಮತ್ತು ಶಿವಸೇನೆ ಮಾತ್ರವಲ್ಲ ಬಿಜೆಪಿಯೊಳಗಿನ ಬಹುತೇಕ ಹಿರಿಯ ನಾಯಕರು ಕೂಡಾ ನರೇಂದ್ರಮೋದಿ ಅವರಿಗೆ ವಿರುದ್ಧವಾಗಿರುವುದರಿಂದ ತೃತೀಯರಂಗದ ನಾಯಕರು ಸ್ನೇಹಹಸ್ತ ಚಾಚಿದರೆ ಮೋದಿ ಅವರನ್ನು ಕೊಡವಿಕೊಳ್ಳುವುದು ಪಕ್ಷಕ್ಕೆ ಕಷ್ಟವಾಗಲಾರದು. ಮುಸ್ಲಿಮರನ್ನು ಓಲೈಸುತ್ತಿದ್ದಾರೆಂದು ಆರೋಪಿಸಿ ಸಮಾಜವಾದಿ ಪಕ್ಷದ ನಾಯಕನನ್ನು `ಮುಲ್ಲಾ ಮುಲಾಯಂ' ಎಂದು ದೂಷಿಸಿದ್ದ ಸಂಘ ಪರಿವಾರದ ನಾಯಕರು ಇಂತಹ `ಅಪವಿತ್ರ ಸಂಬಂಧ'ವನ್ನು ಒಪ್ಪಬಹುದೇ?
ದೇವರ ಮೂರ್ತಿಗಳಿಗೆ ಚಪ್ಪಲಿ ಹಾರ ಹಾಕಿದ ದ್ರಾವಿಡ ಪಕ್ಷಗಳ ಜತೆಯಲ್ಲಿಯೇ ಸೇರಿಕೊಂಡಾಗ ಆಕ್ಷೇಪ ಎತ್ತದವರು ಇದನ್ನು ಯಾಕೆ ಒಪ್ಪಲಾರರು? ಪಕ್ಷಕ್ಕೆ ಅಧಿಕಾರ ಬಂದರೆ ತಮಗೆ ಬಂದಂತೆ ಎಂದು ಅವರು ಅನುಭವದ ಬಲದಿಂದ ಕಂಡುಕೊಂಡಿಲ್ಲವೇ?  ಅಧಿಕಾರವನ್ನು ಚಪ್ಪರಿಸಿದವರಿಗೆ ಅದರ ಸವಿ ಗೊತ್ತಿಲ್ಲವೇ?

Sunday, March 24, 2013

ಸಂಜೂಬಾಬಾಗೆ ಕಣ್ಣೀರಿಡುವ ಮುನ್ನ ಯೋಚಿಸಿ

ಪ್ರಜಾಪ್ರಭುತ್ವದ ಹಾದಿ ತಪ್ಪಿಸುವ ಪ್ರಯತ್ನ ನಡೆದ ಸಂದರ್ಭಗಳಲ್ಲಿ ಕೆಲವರು ವ್ಯಂಗ್ಯವಾಗಿ `ಇಲ್ಲಿ ಎಲ್ಲರೂ ಸಮಾನರು, ಕೆಲವರು ಹೆಚ್ಚು ಸಮಾನರು' ಎಂದು ಹೇಳುವುದುಂಟು. ಮುಂಬೈ ಸ್ಫೋಟದ ಅಪರಾಧಿಗಳಲ್ಲಿ ಒಬ್ಬನಾದ ಹಿಂದಿ ಚಿತ್ರನಟ ಸಂಜಯ್‌ದತ್‌ಗೆ ಐದುವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಕ್ಕಾಗಿ ಗಣ್ಯಾತಿಗಣ್ಯರು ಕಣ್ಣೀರು ಸುರಿಸುತ್ತಿರುವುದು ಇಂತಹದ್ದೊಂದು ಸಂದರ್ಭ. ಚಲನಚಿತ್ರ ನಟನಟಿಯರಿಂದ ಹಿಡಿದು ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷರಾದ ನ್ಯಾಯಮೂರ್ತಿ (ನಿವೃತ್ತ) ಮಾರ್ಕಂಡೇಯ ಕಟ್ಜು ವರೆಗೆ ಹಲವು ಖ್ಯಾತನಾಮರು ಸಂಜಯ್‌ದತ್ ಪರವಾಗಿ ಬೊಗಸೆಯೊಡ್ಡಿ ಸರ್ಕಾರ ಮತ್ತು ನ್ಯಾಯಾಲಯದ ಮುಂದೆ ದಯಾಭಿಕ್ಷೆ ಬೇಡುತ್ತಿದ್ದಾರೆ. ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಹೊಂದಿರುವ ಸಮಾಜದ `ಕೆನೆಪದರ'ದಂತಿರುವ ಈ ಗಣ್ಯರು ತಮ್ಮ ಪ್ರಭಾವಳಿಯ ಬಲದಿಂದ ಸಂಜಯ್‌ದತ್‌ಗೆ ಜೈಲು ಶಿಕ್ಷೆಯಾಗದಂತೆ ನೋಡಿಕೊಳ್ಳುವ ಪ್ರಯತ್ನದಲ್ಲಿ ಗೆಲ್ಲಲೂ ಬಹುದು. ಆದರೆ ಸಮಾನತೆಯ ಬೀಜ ಮಂತ್ರದ ಪ್ರಜಾಪ್ರಭುತ್ವವನ್ನು ತಾವು ಸೋಲಿಸುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವಾದರೂ ಈ ಗಣ್ಯರಿಗಿದೆಯೇ?
ಮುಂಬೈ ಸ್ಫೋಟ ನಡೆದಾಗ ಸಂಜಯ್‌ದತ್ ಎಳೆಯ ಬಾಲಕನಾಗಿರಲಿಲ್ಲ, ಆತನಿಗೆ 33 ವರ್ಷವಾಗಿತ್ತು. ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳದಷ್ಟು ಆತ ಅಮಾಯಕನಾಗಿರಲಿಲ್ಲ.  ಲೋಕಸಭಾ ಸದಸ್ಯ ತಂದೆ ಮತ್ತು ಖ್ಯಾತ ನಟಿ ನರ್ಗಿಸ್‌ದತ್‌ನಂತಹ ಪ್ರಭಾವಿ ದಂಪತಿಗಳ ಮುದ್ದಿನ ಮಗನಾದ ಸಂಜಯ್ ಆತನ ಓರಗೆಯ ಇತರ ಕೆಲವು ಯುವಕರು ಅನುಭವಿಸುತ್ತಿದ್ದಂತಹ ಅಸಹಾಯಕತೆ, ಅಸುರಕ್ಷತೆ ಹೊಂದಿರಲು ಕಾರಣಗಳೇ ಇಲ್ಲ. ಒಂದಲ್ಲ ಒಂದು ಬಗೆಯ ಅಪರಾಧಗಳಿಗಾಗಿ ಮುಂಬೈನ ಪತ್ರಿಕೆಗಳಲ್ಲಿ ನಿತ್ಯ ಸುದ್ದಿಯಲ್ಲಿರುತ್ತಿದ್ದ ದಾವೂದ್ ಇಬ್ರಾಹಿಂ, ಅಬುಸಲೇಮ್, ಶರತ್‌ಶೆಟ್ಟಿ ಮೊದಲಾದವರ ಅಸಲಿ ಚಹರೆಯೇನು ಎಂದು ತಿಳಿಯದಷ್ಟು ಸಂಜಯ್‌ದತ್ ಮುಗ್ಧನಾಗಿರಲಿಲ್ಲ. ಬೇಕಿದ್ದರೆ ಆತ್ಮರಕ್ಷಣೆಗಾಗಿ ರೈಫಲ್ ಇಟ್ಟುಕೊಳ್ಳಲು ಪರವಾನಗಿ ಪಡೆಯುವುದು ಸಂಸದರ ಮಗನಿಗೆ ಕಷ್ಟವೂ ಆಗಿರಲಿಲ್ಲ. ಆತ್ಮರಕ್ಷಣೆಗಿಂತ ಬೇರೆ ದುರುದ್ದೇಶ ಆತನಿಗೆ ಇತ್ತು ಎನ್ನುವುದನ್ನು ಆಗಿನ ಸಾಂಧರ್ಭಿಕ ಪುರಾವೆಗಳು ಹೇಳುತ್ತವೆ.
ಗುಜರಾತ್‌ನ ಕರಾವಳಿಯಲ್ಲಿ ಬಂದು ಬಿದ್ದಿದ್ದ ಬಂದೂಕು, ಪಿಸ್ತೂಲ್ ಮತ್ತು ಕೈಬಾಂಬುಗಳನ್ನು ದಾವೂದ್ ಸೂಚನೆ ಮೇರೆಗೆ ಮುಂಬೈಗೆ ತಂದಿದ್ದವನು ಅಬುಸಲೇಮ್. ಅವುಗಳನ್ನು ಎಲ್ಲಿ ಸಂಗ್ರಹಿಸಿಡುವುದು ಎನ್ನುವ ಪ್ರಶ್ನೆ ಎದುರಾದಾಗ ನೆನಪಾದವನು ಪರಿಚಯಸ್ಥನಾದ ಸಂಜಯ್‌ದತ್ ಎಂಬ ನಟ. ದುಬೈನಿಂದ ಬಂದ ಆದೇಶದ ಮೇರೆಗೆ ಈ ಕೆಲಸವನ್ನು ಸಂತೋಷದಿಂದಲೇ ಒಪ್ಪಿಕೊಂಡಿದ್ದ ಸಂಜಯ್‌ದತ್  ಶಸ್ತ್ರಾಸ್ತ್ರಗಳನ್ನೆಲ್ಲ ತಮ್ಮ ಮನೆಯ ಗ್ಯಾರೇಜ್‌ನಲ್ಲಿಟ್ಟುಕೊಂಡಿದ್ದ. ಕೆಲವು ದಿನಗಳನಂತರ ಕೈಬಾಂಬುಗಳನ್ನು ವಾಪಸು ಕೊಂಡುಹೋಗುವಂತೆ ಅಬುಸಲೇಮ್‌ಗೆ ಹೇಳಿದ್ದ ಸಂಜಯದತ್ ಎಕೆ-56 ಬಂದೂಕು ಮತ್ತು ಪಿಸ್ತೂಲ್‌ಗಳನ್ನು ಮಾತ್ರ ತನ್ನಲ್ಲಿಯೇ ಇಟ್ಟುಕೊಂಡಿದ್ದ. ಒಂದು ಪಿಸ್ತೂಲ್ ಮಾತ್ರ ಇಟ್ಟುಕೊಂಡಿದ್ದರೆ ಅದು ಆತ್ಮರಕ್ಷಣೆಗೆಂದು ವಾದವನ್ನಾದರೂ ಮಾಡಬಹುದಿತ್ತು. ಇದರ ಸುಳಿವು ಪೊಲೀಸರಿಗೆ ಇದ್ದರೂ ಮಾರಿಷಸ್‌ನಲ್ಲಿದ್ದ ಸಂಜಯ್‌ದತ್ ದೇಶಕ್ಕೆ ಹಿಂದಿರುಗಲೆಂದು ಕಾಯುತ್ತಾ ಕೂತಿದ್ದರು.ಆದರೆ ಪತ್ರಿಕೆಯೊಂದು ಈ ಸುದ್ದಿ ಪ್ರಕಟಿಸಿದ ಕೂಡಲೇ ವಿಷಯ ತಿಳಿದುಕೊಂಡು ಜಾಗೃತನಾದ ಸಂಜಯ್‌ದತ್ ಗೆಳೆಯರಿಗೆ ಪೋನ್ ಮಾಡಿ ಮನೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ನಾಶಪಡಿಸುವಂತೆ ಕೇಳಿಕೊಂಡಿದ್ದ. ಸಂಜಯ್‌ದತ್ ಈ ಎಲ್ಲ ಕೃತ್ಯಗಳನ್ನು ಅಮಾಯಕತನದಿಂದ ಇಲ್ಲವೆ ಆತ್ಮರಕ್ಷಣೆಗಾಗಿ ಮಾಡಿದ್ದ ಎಂದು ಹೇಳುವವರನ್ನು ಮೂರ್ಖರೆನ್ನದೆ ಬೇರೆ ಹೇಗೆ ಕರೆಯಲು ಸಾಧ್ಯ? 1993ರಲ್ಲಿ ಆತ ಏನು ಮಾಡಿದ್ದನೋ ಅದು ಬುದ್ದಿಪೂರ್ವಕವಾಗಿ, ಪರಿಣಾಮದ ಬಗ್ಗೆ ಅರಿವಿದ್ದೂ ಮಾಡಿದ್ದ ಅಪರಾಧ. ಎಲ್ಲರಿಗೂ ಅನ್ವಯವಾಗುವ ಕಾನೂನು ಪ್ರಕಾರ ಒಬ್ಬ ವ್ಯಕ್ತಿ ಅಪರಾಧಿ ಎಂದೆನಿಸಿಕೊಳ್ಳಲು ಇನ್ನೇನು ಬೇಕು?
ಸಂಜಯ್‌ದತ್‌ನ ನುಣುಪು ಕೆನ್ನೆಗಳಿಂದ ಜಾರಿಬೀಳುತ್ತಿರುವ ಕಣ್ಣೀರು ಒರೆಸಲು ಹೊರಟ ಈ ಗಣ್ಯರಿಗೆ 1993ರಲ್ಲಿ ಮುಂಬೈನ ಹನ್ನೆರಡು ಕಡೆಗಳಲ್ಲಿ ನಡೆದ ಬಾಂಬ್ ಸ್ಫೋಟದಿಂದ ಮೃತರಾದ 257 ಅಮಾಯಕರ ಕುಟುಂಬದ ಸದಸ್ಯರು 20 ವರ್ಷಗಳಿಂದ ಹರಿಸುತ್ತಿರುವ ಕಣ್ಣೀರು ಯಾಕೆ ಕಾಣಿಸುತ್ತಿಲ್ಲವೋ ಗೊತ್ತಿಲ್ಲ. ಸಂಜಯ್‌ದತ್ ಬಂಧನದಿಂದ ಆತನ ಮೇಲೆ ಚಿತ್ರನಿರ್ಮಾಪಕರು ಹೂಡಿದ್ದ 250 ಕೋಟಿ ರೂಪಾಯಿ ಮುಳುಗಿ ಹೋಗುತ್ತದೆ ಎನ್ನುವುದು ಇನ್ನು ಕೆಲವರ ಚಿಂತೆ. ಬಾಲಿವುಡ್‌ನ ಬಹುತೇಕ ನಿರ್ಮಾಪಕರ ಹಿನ್ನೆಲೆ ಏನು, ಅವರ ದುಡ್ಡಿನ ಮೂಲ ಯಾವುದು ಎನ್ನುವುದು ಈ ಗಣ್ಯರಿಗೆ ಗೊತ್ತಿಲ್ಲವೇ? ಇದರಿಂದ ಚಿತ್ರರಂಗವನ್ನೇ ನಂಬಿದ್ದ ನೂರಾರು ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ ಎನ್ನುವ ಎಂದಿನ ಒಗ್ಗರಣೆ ಬೇರೆ. ಮುಂಬೈನ ಬಟ್ಟೆಗಿರಣಿಗಳು ಮುಚ್ಚಿ ಸಾವಿರಾರು ಕಾರ್ಮಿಕರು ಬೀದಿಗೆ ಬಿದ್ದಾಗ ಇವರ‌್ಯಾರೂ ಕಣ್ಣೀರು ಹಾಕಿಲ್ಲ. ಮಹಾರಾಷ್ಟ್ರದಲ್ಲಿಯೇ ಬರದ ಬೇಗೆ ಮತ್ತ ಸಾಲದ ಹೊರೆ ತಾಳಲಾರದೆ ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಇವರ‌್ಯಾರೂ ದನಿ ಎತ್ತಲಿಲ್ಲ. ವಿರೋಧಿಗಳಿಂದ `ಆಸ್ಥಾನ ವಿದೂಷಕ'ನೆಂದು ಆರೋಪಕ್ಕೊಳಗಾಗಿರುವ ನ್ಯಾ.ಕಟ್ಜು ಅವರು ಒಮ್ಮಮ್ಮೆ ಈ ಪಾತ್ರವನ್ನು ಗಂಭೀರವಾಗಿ ಸ್ವೀಕರಿಸಲು ಹೊರಟವರಂತೆ ಕಾಣುತ್ತಾರೆ. ಮಹಾತ್ಮಗಾಂಧೀಜಿಯನ್ನು ಬಳಸಿಕೊಂಡು ಒಂದೆರಡು ವ್ಯಾಪಾರಿ ಚಿತ್ರಗಳಲ್ಲಿ ನಟಿಸಿದ್ದ ನಟನೊಬ್ಬನನ್ನು ಸಮಾಜಸುಧಾರಕನೆಂದು ಬಿಂಬಿಸಲು ಹೊರಟಿರುವ ನ್ಯಾ.ಕಟ್ಜು ಅವರ ಕುರುಡುಕಣ್ಣಿಗೆ ಏನೆನ್ನಬೇಕು. ಅವರಿಗೆ ಕಾಣದೆ ಇದ್ದದ್ದು ಇನ್ನಷ್ಟು ಇದೆ.
ಯುಸೂಪ್ ನಲ್‌ವಾಲಾ ಜೀವನದಲ್ಲಿ ಮಾಡಿದ್ದ ಏಕೈಕ ತಪ್ಪೆಂದರೆ ಸಂಜಯ್‌ದತ್‌ನ ಇನ್ನೊಂದು ಅಕ್ರಮ ಚಟುವಟಿಕೆಯಾಗಿದ್ದ ಮೃಗ ಬೇಟೆಗೆ ಆಗಾಗ ಜತೆಯಲ್ಲಿ ಹೋಗಿದ್ದು. ಉಳಿದಂತೆ ದಾವೂದ್ ಮತ್ತಿತರ ಪಾತಕಿಗಳ ಜತೆ ಆತನಿಗೆ ಯಾವ ಸಂಬಂಧವೂ ಇರಲಿಲ್ಲ. ಸಂಜಯ್‌ದತ್ ಸೂಚನೆಯಂತೆ ಆತನ ಮನೆಯಲ್ಲಿದ್ದ ಎಕೆ-56 ಮತ್ತು ಪಿಸ್ತೂಲ್‌ಗಳನ್ನು ಕುಲುಮೆಯಲ್ಲಿ ಹಾಕಿ ನಾಶಪಡಿಸಲು ಪ್ರಯತ್ನಿಸಿದ್ದ ನಲ್‌ವಾಲಾ ಈಗಾಗಲೇ ಐದುವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾನೆ. ನಲ್‌ವಾಲಾನಿಗೆ ನೆರವಾಗಿದ್ದ ಕುಲುಮೆಯ ಮಾಲೀಕ ಕೇರ್ಸಿ ಅಡ್‌ಜೇನಿಯಾ ಎರಡು ವರ್ಷ, ಶಸ್ತ್ರಾಸ್ತ್ರ ನಾಶಕ್ಕೆ ಮೊದಲು ಅವುಗಳನ್ನು ಎರಡು ದಿನ ಮನೆಯಲ್ಲಿ ಇಟ್ಟುಕೊಂಡಿದ್ದ ಜೈಬುನ್ಸಿಯಾ ಖಾದ್ರಿ ಐದು ವರ್ಷ, ಶಸ್ತ್ರಾಸ್ತ್ರಗಳನ್ನು ಸಂಜಯ್‌ದತ್ ಮನೆಯಿಂದ ಕೊಂಡೊಯ್ದಿದ್ದ ಮನಸೂರ್ ಅಹ್ಮದ್ ಐದುವರ್ಷ, ಸಂಜಯ್‌ದತ್‌ಗೆ ಶಸ್ತ್ರಾಸ್ತ್ರಗಳನ್ನು ಕೊಟ್ಟಿದ್ದ ಇಬ್ರಾಹಿಂ ಮೂಸಾ ಹತ್ತುವರ್ಷ, ಸಂಜಯ್‌ದತ್ ಮನೆಗೆ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ದಿದ್ದ ಸಮೀರ್ ಹಿಂಗೋರಾ 9 ವರ್ಷ, ಮತ್ತು ದುಬೈನಲ್ಲಿ ನಡೆದಿದ್ದ ಸಂಚಿನ ಸಭೆಯಲ್ಲಿ ಪಾಲ್ಗೊಂಡಿದ್ದ ಏಜಾಜ್ ಪಠಾಣ್ ಹತ್ತು ವರ್ಷ ಉಗ್ರ ಕಾರಾಗೃಹ ಶಿಕ್ಷೆ ಅನುಭವಿಸಿದ್ದಾರೆ.  ಇವರೆಲ್ಲರಿಗೂ ಮುಂಬೈ ಟಾಡಾ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ನಾಶದ ಪ್ರಕರಣದಲ್ಲಿ ಸಂಜಯ್‌ದತ್ ಜತೆ ಭಾಗಿಯಾಗಿದ್ದ ಕಾರಣಕ್ಕಾಗಿ ಎರಡರಿಂದ ಹತ್ತುವರ್ಷಗಳ ಜೈಲುಶಿಕ್ಷೆ ಅನುಭವಿಸಿದ್ದ ಏಳು ಮಂದಿಯ ಬಗ್ಗೆ ಯಾರೂ ಹಿಂದೆಯೂ  ಮಾತನಾಡಿಲ್ಲ ಮತ್ತು ಈಗಲೂ ಮಾತನಾಡುತ್ತಿಲ್ಲ. ಇವರಲ್ಲಿ ಹೆಚ್ಚಿನವರಿಗೆ ದೊಡ್ಡ ಅಪರಾಧಗಳ ಹಿನ್ನೆಲೆ ಇರಲಿಲ್ಲ, ಅವರು ಮಾಡಿದ್ದ ಏಕೈಕ ಅಪರಾಧ ಎಂದರೆ ಸಂಜಯ್‌ದತ್ ಜತೆಗಿನ ಸ್ನೇಹ ಮಾಡಿದ್ದು.
ಈ ಏಳು ಮಂದಿಗೆ ಶಿಕ್ಷೆ ವಿಧಿಸಿದ್ದ ನ್ಯಾಯಾಲಯ ಸಂಜಯ್‌ದತ್ ಅವರನ್ನು ಮುಂಬೈ ಬಾಂಬುಸ್ಫೋಟದ ಸಂಚಿನ ಆರೋಪದಿಂದ ಬಿಡುಗಡೆಗೊಳಿಸಿತ್ತು. ಇದರಲ್ಲಿ ಆ ಕಾಲದಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಶಿವಸೇನೆಯ ನಾಯಕ ಬಾಳ್ ಠಾಕ್ರೆ ಪಾತ್ರ ಇತ್ತು. ಮುಸ್ಲಿಮರೆಂದರೆ ಬೆಂಕಿಕಾರುತ್ತಿದ್ದ ಮತ್ತು ಬಾಂಬು ಸ್ಫೋಟದಲ್ಲಿ ಭಾಗವಹಿಸಿದ್ದವರನ್ನೆಲ್ಲ ಗಲ್ಲಿಗೇರಿಸಬೇಕೆಂದು ಮಾತನಾಡುತ್ತಿದ್ದ ಠಾಕ್ರೆ ಅದೇ ಪ್ರಕರಣದ ಒಬ್ಬ ಆರೋಪಿ ಸಂಜಯ್‌ದತ್‌ಗೆ ಯಾಕೆ ನೆರವಾದರು? ಇದರಲ್ಲಿ ಅವರಿಗೆ ಏನು ಆಸಕ್ತಿ ಇತ್ತು? ಈ ಪ್ರಶ್ನೆಗಳ ಬಗ್ಗೆ ಈ ವರೆಗೆ ಚರ್ಚೆಯಾಗಿಲ್ಲ. ಈಗ ಬಾಳ್ ಠಾಕ್ರೆ ಮಾದರಿಯಲ್ಲಿಯೇ ಇತರರು ಮಾತನಾಡತೊಡಗಿದ್ದಾರೆ.
`ಮರಣದಂಡನೆಗೆ ಗುರಿಯಾಗಿರುವವರೆಲ್ಲರೂ ಯಾಕೆ ಸಮಾಜದಲ್ಲಿರುವ ಬಡವರು, ದುರ್ಬಲರು, ದಲಿತರು ಮತ್ತು ಅಲ್ಪಸಂಖ್ಯಾತರು ಮಾತ್ರ ಆಗಿರುತ್ತಾರೆ?' ಎಂದು ಡಾ.ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಗಳಾಗಿದ್ದಾಗ ಪ್ರಶ್ನಿಸಿದ್ದರು. ಇದೇ ಅಭಿಪ್ರಾಯವನ್ನು ಬೆಂಬಲಿಸುವವರಂತೆ ಮಾತನಾಡಿದ್ದ ಹಿರಿಯ ನ್ಯಾಯಮೂರ್ತಿ ವಿ.ಆರ್.ಕೃಷ್ಣ ಅಯ್ಯರ್ ` ಯಾಕೆ ಬಡವರು, ಕೆಳಜಾತಿ ಜನರು ಮತ್ತು ವ್ಯವಸ್ಥೆಯನ್ನು ಪ್ರಶ್ನಿಸುವವರು ಮಾತ್ರ ಮರಣದಂಡನೆಗೆ ಗುರಿಯಾಗುತ್ತಾರೆ,  ಶ್ರಿಮಂತರು, ಮೇಲ್ಜಾತಿ ಜನರು ಮತ್ತು ವ್ಯವಸ್ಥೆಯ ಪರಿಪಾಲಕರು ಯಾಕೆ ಮರಣದಂಡನೆಗೀಡಾದವರ ಅಪರಾಧಿಗಳ ಪಟ್ಟಿಯಲ್ಲಿ ಕಾಣುತ್ತಿಲ್ಲ' ಎಂದು ಪ್ರಶ್ನಿಸಿದ್ದರು. ಗಲ್ಲಿಗೇರಲು ಸಿದ್ದವಾಗಿ ಜೈಲಲ್ಲಿ ದಿನ ಎಣಿಸುತ್ತಿರುವ ಅಪರಾಧಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಅಧ್ಯಯನವನ್ನು ಯಾರಾದರೂ ಮಾಡಿದರೆ ಡಾ.ಕಲಾಂ ಮತ್ತು ನ್ಯಾ.ಅಯ್ಯರ್ ಕೇಳಿದ್ದ ಪ್ರಶ್ನೆಗಳಿಗೆ ಉತ್ತರ ಸಿಗಬಹುದು. ಮನುಷ್ಯನ ಸಹಜ ಸ್ವಭಾವಗಳಲ್ಲೊಂದಾದ ಅಪರಾಧಗಳಿಗೆ ಜಾತಿ,ಧರ್ಮ ವರ್ಗಗಳ ಭೇದ ಇಲ್ಲದೆ ಇದ್ದರೂ ಅಪರಾಧಿಗಳಲ್ಲಿ ಮಾತ್ರ ಈ ಭೇದ ಯಾಕೆ ಕಾಣುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಲು ಹೋದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯ ನಾವು ನೋಡಲಿಚ್ಚಿಸದ ಇನ್ನೊಂದು ಮುಖ ಅನಾವರಣಗೊಳ್ಳುತ್ತದೆ.
ಪ್ರಶ್ನೆ ಅಷ್ಟೊಂದು ಕಷ್ಟದ್ದಲ್ಲ. ಎಂತಹ ಘನಘೋರ ಅಪರಾಧಗಳನ್ನು ಮಾಡಿದರೂ ಖ್ಯಾತ ವಕೀಲರನ್ನು ನೇಮಿಸಿಕೊಂಡರೆ ಯಾವ ಕಾನೂನಿನಿಂದಲೂ ಕೂದಲು ಕೊಂಕದ ರೀತಿಯಲ್ಲಿ ಪಾರಾಗಬಹುದೆನ್ನುವುದಕ್ಕೆ ಎಷ್ಟಾದರೂ ಉದಾಹರಣೆಗಳನ್ನು ಕೊಡುತ್ತಾಹೋಗಬಹುದು. ಆದರೆ ಆ ಕ್ಷಣದ ಆವೇಶ, ಅಮಾಯಕತನ ಇಲ್ಲವೆ ಪರಿಸ್ಥಿತಿಯ ಒತ್ತಡಕ್ಕೆ ಸಿಕ್ಕಿ ಅಪರಾಧ ಮಾಡಿ ಜೈಲು ಸೇರುವ ದುರ್ಬಲ,ಬಡವ, ಕೆಳಜಾತಿಯ ಕೈದಿಗಳಿಗೆ ದುಬಾರಿ ವಕೀಲರನ್ನು ನೇಮಿಸಿಕೊಳ್ಳುವ ಆರ್ಥಿಕ ಶಕ್ತಿಯೂ ಇರುವುದಿಲ್ಲ. ಒಂದೊಮ್ಮೆ ನ್ಯಾಯಾಲಯ ಜಾಮೀನು ನೀಡಿದರೂ ಅದನ್ನು ಒದಗಿಸುವ ಸಾಮರ್ಥ್ಯ ಅವರಲ್ಲಿಲ್ಲದೆ ಜೈಲಲ್ಲಿಯೇ ಇದ್ದು ಬಿಡುತ್ತಾರೆ. ಎಷ್ಟೊ ಸಂದರ್ಭಗಳಲ್ಲಿ ಒಡೆಯನ ಮೇಲಿನ ಆರೋಪವನ್ನು ಬೆದರಿಕೆಯಿಂದಲೋ, ದುಡ್ಡಿನ ಆಸೆಯಿಂದಲೋ ತಮ್ಮ ತಲೆಮೇಲೆ ಹೊತ್ತು ಜೈಲು ಸೇರುವವರೂ ಇದ್ದಾರೆ. ಸಲ್ಮಾನ್‌ಖಾನ್ ಡ್ರೈವ್ ಮಾಡುತ್ತಿದ್ದ ಕಾರು ಅಪಘಾತ ಮಾಡಿದರೂ ಆರೋಪಿ ಮಾತ್ರ ಆತನ ಚಾಲಕನಾಗಿರುತ್ತಾನೆ.ವಿಚಾರಾಧೀನ ಕೈದಿಗಳಲ್ಲಿ ಬಹುಪಾಲು ಮಂದಿ ಈ ರೀತಿ ದಾಳಗಳಾಗಿ ಬಳಕೆಯಾದವರು. ಸೂತ್ರದಾರರು ಬೇರೆಲ್ಲೊ ಇರುತ್ತಾರೆ. ಅಪರಾಧಗಳ ಸುಪಾರಿ ಕೊಟ್ಟವರನ್ನು ಪೊಲೀಸರು ಬಂಧಿಸಿದ್ದೇ ಕಡಿಮೆ, ಜೈಲು ಸೇರಿದವರಲ್ಲಿ ಹೆಚ್ಚಿನವರು ಕಾಸಿಗಾಗಿ ಸುಪಾರಿ ಪಡೆದು ಕೊಲೆ-ಹಲ್ಲೆ ನಡೆಸಿದವರು. ಸಾಮಾನ್ಯವಾಗಿ ಅವರಿಗೂ ಮತ್ತು ಅವರಿಗೆ ಬಲಿಯಾದವರಿಗೂ ವೈಯಕ್ತಿಕವಾದ ಯಾವ ದ್ವೇಷವೂ ಇರುವುದಿಲ್ಲ.
ಎಂಟುವರ್ಷಗಳ ಹಿಂದೆ ಅಸ್ಸಾಂನ ಗುಡ್ಡಗಾಡು ಜನಾಂಗಕ್ಕೆ ಸೇರಿದ್ದ ಮಾಚಂಗ್ ಲಲುಂಗ್ ಹೆಸರು ಇಡೀ ದೇಶದ ಗಮನ ಸೆಳೆದಿತ್ತು . ಯಾರದ್ದೋ ಮೇಲೆ ಹಲ್ಲೆ ನಡೆಸಿದ್ದ ಕಾರಣಕ್ಕೆ 23ನೇ ವರ್ಷದಲ್ಲಿ ಬಂಧಿತನಾಗಿದ್ದ ಲಲುಂಗ್ 54 ವರ್ಷಗಳನ್ನು ಜೈಲಲ್ಲಿ ಕಳೆದು 77ನೇ ವರ್ಷದಲ್ಲಿ ಬಿಡುಗಡೆಯಾಗಿದ್ದರು. ಅದರ ನಂತರದ ಎರಡೇ ವರ್ಷಗಳಲ್ಲಿ ಅವರು ಮೃತಪಟ್ಟಿದ್ದರು. ಇದು ಒಬ್ಬ ಲಲುಂಗ್ ಅವರಿಗೆ ಸಂಬಂಧಿಸಿದ್ದ ಕತೆಯಲ್ಲ. ಭಾರತದ ಜೈಲುಗಳ ಒಳಗೆ ಇಣುಕಿದರೆ ಇಂತಹ ನೂರಾರು ಲಲುಂಗ್‌ಗಳು ಪತ್ತೆಯಾಗಬಹುದು. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದೇಶದ 1356 ಜೈಲುಗಳಲ್ಲಿರುವ ಮೂರುವರೆ ಲಕ್ಷ ಕೈದಿಗಳಲ್ಲಿ ವಿಚಾರಣಾಧೀನ ಕೈದಿಗಳೇ ಶೇಕಡಾ 70ರಷ್ಟಿದ್ದಾರೆ. ಈ ವಿಚಾರಾಧೀನ ಕೈದಿಗಳಲ್ಲಿ ಸುಮಾರು 1.75 ಲಕ್ಷ ಕೈದಿಗಳು ಹಲ್ಲೆ, ಕಳ್ಳತನ ಮೊದಲಾದ ಸಣ್ಣಪುಟ್ಟ ಅಪರಾಧಗಳಲ್ಲಿ ಭಾಗಿಯಾಗಿದ್ದವರಂತೆ. ಇವರೆಲ್ಲ ತಮ್ಮ ಮೇಲಿನ ಆರೋಪಿತ ಅಪರಾಧಗಳಿಗೆ ನೀಡಲಾಗುವ ಶಿಕ್ಷೆಯನ್ನು ಎಂದೋ ಅನುಭವಿಸಿಬಿಟ್ಟಿದ್ದಾರೆ. ಇಂತಹ ವಿಚಾರಣಾಧೀನ ಕೈದಿಗಳ ಬಗ್ಗೆ ಶೀಘ್ರಗತಿಯಲ್ಲಿ ವಿಚಾರಣೆ ನಡೆಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ಕೆಳನ್ಯಾಯಾಲಯಗಳಿಗೆ ಸೂಚನೆ ನೀಡುವಂತೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಎಂ.ವೀರಪ್ಪ ಮೊಯಿಲಿ  ಕಾನೂನು ಸಚಿವರಾಗಿದ್ದ ಪತ್ರ ಬರೆದಿದ್ದರು. ಇದಕ್ಕಾಗಿ ಬಡ ಮತ್ತು ದುರ್ಬಲ ಕೈದಿಗಳಿಗೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ನೀಡಲು ಕೂಡಾ ಸೂಚನೆ ನೀಡಿದ್ದರು. ಆದರೆ ಪರಿಸ್ಥಿತಿಯಲ್ಲಿ ಹೆಚ್ಚು ಬದಲಾವಣೆಯಾಗಿಲ್ಲ.
ಸಂಜೂಬಾಬಾನಿಗಾಗಿ ಕಣ್ಣೀರು ಸುರಿಸುವವರು ಅದರ ಬದಲಿಗೆ ಜೈಲಲ್ಲಿ ಕೊಳೆಯುತ್ತಿರುವ ಆರೋಪಿಗಳ ಶೀಘ್ರ ವಿಚಾರಣೆಗಾಗಿ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ಮುಂದಾದರೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನತೆಯ ವಿಶ್ವಾಸವನ್ನು ಉಳಿಸಲು ನೆರವು ನೀಡಿದ ಪುಣ್ಯವನ್ನಾದರೂ ಕಟ್ಟಿಕೊಳ್ಳಬಹುದು. ಅದನ್ನು ಮಾಡಲಿಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಇಂತಹ `ಗಣ್ಯ ಅಪರಾಧಿ'ಗಳ ನೆರವಿಗೆ ಧಾವಿಸಿ ಪ್ರಜಾಪ್ರಭುತ್ವವನ್ನು ಅಪಹ್ಯಾಸಕ್ಕೀಡು ಮಾಡಬಾರದು, ಬಾಯಿ ಮುಚ್ಚಿಕೊಂಡು ಕೂರಬೇಕು.

Sunday, March 17, 2013

ನ್ಯಾಯಮೂರ್ತಿ ಕಟ್ಜು ಅವರ ತಪ್ಪು ರೋಗನಿದಾನ

ಪತ್ರಕರ್ತರ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿಗೆ ಸಂಬಂಧಿಸಿದ ಹಳೆಯ ವಿವಾದದ ಜೇನುಗೂಡಿಗೆ ಭಾರತೀಯ ಪತ್ರಿಕಾ ಮಂಡಳಿ (ಪಿಸಿಐ)ಯ ಅಧ್ಯಕ್ಷ ನ್ಯಾಯಮೂರ್ತಿ (ನಿವೃತ್ತ) ಮಾರ್ಕಂಡೇಯ ಕಟ್ಜು ಕೈಹಾಕಿದ್ದಾರೆ.
`ಪತ್ರಕರ್ತರಾಗಿ ಕಾರ್ಯನಿರ್ವಹಿಸಲು ಅರ್ಹತೆಯನ್ನು ಕಾನೂನುಬದ್ಧವಾಗಿ ನಿಗದಿಪಡಿಸುವ ಅಗತ್ಯ ಇದೆ' ಎಂದು ಪ್ರತಿಪಾದಿಸಿರುವ ನ್ಯಾ.ಕಟ್ಜು ಮಾಧ್ಯಮ ರಂಗ ಪ್ರವೇಶಿಸಲು ಅಗತ್ಯವಾದ ಅರ್ಹತೆಯೇನಿರಬೇಕೆಂದು ಸೂಚಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.
`ತರಬೇತಿ ಇಲ್ಲದವರ ಪ್ರವೇಶ ಮಾಧ್ಯಮರಂಗದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತಿದೆ. ಈ ರೀತಿ ಬಂದವರು ಮಾಧ್ಯಮರಂಗದಲ್ಲಿ ಉನ್ನತ ಗುಣಮಟ್ಟವನ್ನು ಕಾಪಾಡುತ್ತಿಲ್ಲ' ಎಂದು ಯಥಾಪ್ರಕಾರ ತನ್ನದೇ `ತೀರ್ಪು' ಕೂಡಾ ಅವರು ನೀಡಿದ್ದಾರೆ. `....ಬೇರೆ ಯಾವುದೋ ವಿಷಯದ ಮೇಲೆ ಪಿಎಚ್‌ಡಿಯನ್ನೇ ಪಡೆದುಕೊಂಡಿದ್ದರೂ ಪತ್ರಕರ್ತರಾಗಲು ಬಯಸುವವರು ಕಡ್ಡಾಯವಾಗಿ ಪತ್ರಿಕೋದ್ಯಮದ ಶಿಕ್ಷಣವನ್ನು ಪಡೆದಿರಬೇಕು. ಇದಾದ ನಂತರ ವಕೀಲರಿಗೆ ಬಾರ್ ಕೌನ್ಸಿಲ್ ನೀಡುವಂತೆ ಪತ್ರಕರ್ತರಿಗೂ ಪರವಾನಗಿ ಪತ್ರ ನೀಡಬೇಕು. ಪತ್ರಕರ್ತರು ತಪ್ಪುಮಾಡಿದರೆ ಅವರಿಗೆ ನೀಡಲಾಗಿರುವ ಪರವಾನಗಿಯನ್ನು ವಾಪಸು ಪಡೆಯಬೇಕು....' ಎಂದು ನ್ಯಾ.ಕಟ್ಜು ಮೊದಲ ಪತ್ರಿಕಾ ಹೇಳಿಕೆಯ ನಂತರ ನೀಡಿದ ಸ್ಪಷ್ಟೀಕರಣದಲ್ಲಿ ವಿವರಿಸಿದ್ದಾರೆ.
ಪಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ದಿನದಿಂದ ನ್ಯಾ.ಕಟ್ಜು ಚರ್ಚೆಗೆ ಒಡ್ಡಿರುವ ಹಲವು ವಿಷಯಗಳಲ್ಲಿ ಪತ್ರಕರ್ತರ ಅರ್ಹತೆ ಕೂಡಾ ಒಂದು. ವಕೀಲರು, ವೈದ್ಯರು, ಶಿಕ್ಷಕರಿಗೆಲ್ಲ ನಿರ್ದಿಷ್ಟ ವಿದ್ಯಾರ್ಹತೆ ಮತ್ತು ತರಬೇತಿ ಕಡ್ಡಾಯವಾಗಿರುವಾಗ ಪತ್ರಕರ್ತರಿಗೆ ಯಾಕೆ ಬೇಡ ಎನ್ನುವ ಪ್ರಶ್ನೆಯನ್ನು ನ್ಯಾ.ಕಟ್ಜು ಮಾತ್ರ ಅಲ್ಲ, ಸಾಮಾನ್ಯ ಜನರೂ ಕೇಳುತ್ತಿದ್ದಾರೆ. `
ಪತ್ರಕರ್ತರೆಂದರೆ ರಾಜಕಾರಣಿಗಳು ಇದ್ದ ಹಾಗೆ, ಯಾವುದೇ ಅರ್ಹತೆ ಬೇಡ, ಟಿವಿ ಚಾನೆಲ್‌ಗಳ ಪ್ರವೇಶದ ನಂತರ ಪತ್ರಕರ್ತರಾಗುವುದು ಇನ್ನೂ ಸುಲಭವಾಗಿದೆ. ಓದು-ಬರಹ ಕೂಡಾ ಬೇಡ, ಬಾಯ್ತುಂಬಾ ಮಾತನಾಡಲು ಬಂದರೆ ಸಾಕು ಪತ್ರಕರ್ತರಾಗಬಹುದು' ಎಂಬ ಸಾಮಾನ್ಯ ಜನರ ವ್ಯಂಗ್ಯದ ಮಾತುಗಳನ್ನು ಸಾರಾಸಗಟಾಗಿ ತಳ್ಳಿಹಾಕುವಂತಹ ಸ್ಥಿತಿಯಲ್ಲಿಯೂ ಯಾರೂ ಇಲ್ಲ.
ಆದರೆ ದೇಶದ ಮಾಧ್ಯಮರಂಗಕ್ಕೆ ಹತ್ತಿರುವ ರೋಗಕ್ಕೆ ಪತ್ರಕರ್ತರ  ಶೈಕ್ಷಣಿಕ ಅರ್ಹತೆ ಮತ್ತು ತರಬೇತಿಯ ಕೊರತೆ ಕಾರಣ ಎಂಬ ಸುಲಭ ತೀರ್ಮಾನಕ್ಕೆ ಬರಬಹುದೇ? ಶೈಕ್ಷಣಿಕ ಅರ್ಹತೆಯನ್ನು ಕಡ್ಡಾಯಗೊಳಿಸುವುದರಿಂದ ರೋಗಗ್ರಸ್ತ ಮಾಧ್ಯಮರಂಗ ಕಳೆದುಕೊಂಡಿರುವ ಆರೋಗ್ಯವನ್ನು ಮರಳಿ ಪಡೆಯಬಹುದೇ?
ಸ್ಥಳೀಯವಾದ ಸಣ್ಣಪುಟ್ಟ ಹಗರಣಗಳನ್ನು ಪಕ್ಕಕ್ಕೆ ಇಟ್ಟುಬಿಡುವ, ದೇಶದ ಮಾಧ್ಯಮರಂಗದ ನೈತಿಕ ಬುನಾದಿಯನ್ನೇ ಅಲುಗಾಡಿಸಿದ `ಕಾಸಿಗಾಗಿ ಸುದ್ದಿ' ಮತ್ತು `ರಾಡಿಯಾ ಟೇಪ್'ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೊಳಗಾಗಿರುವ ಖ್ಯಾತ ಪತ್ರಕರ್ತರು, ಉದ್ಯಮಿಯೊಬ್ಬರಿಂದ ಹಣಸುಲಿಗೆ ಮಾಡಲು ಹೊರಟಿದ್ದರೆಂಬ ಆರೋಪಕ್ಕೊಳಗಾಗಿರುವ ಟಿವಿಚಾನೆಲ್‌ನ ಹಿರಿಯ ಪತ್ರಕರ್ತರು, 2ಜಿ ಹಗರಣದಿಂದ ಹಿಡಿದು ಅಕ್ರಮ ಗಣಿಗಾರಿಕೆ ವರೆಗಿನ ಹಲವಾರು ಹಗರಣಗಳಲ್ಲಿ ಫಲಾನುಭವಿಗಳೆಂಬ ಆರೋಪ ಹೊತ್ತಿರುವ ಪತ್ರಕರ್ತರಲ್ಲಿ ಯಾರು ಅನಕ್ಷರಸ್ಥರು? ಯಾರು ಪತ್ರಿಕೋದ್ಯಮದ ಬಗ್ಗೆ ತರಬೇತಿ ಪಡೆಯದವರು ? ವಿಚಿತ್ರವೆಂದರೆ ಪತ್ರಕರ್ತರಿಗೆ ಅರ್ಹತೆಯನ್ನು ನಿಗದಿಪಡಿಸಲು ಹೊರಟಿರುವ ನ್ಯಾ.ಕಟ್ಜು ಅವರು ಮಾಧ್ಯಮ ಸಂಸ್ಥೆಗಳನ್ನು ಸ್ಥಾಪಿಸುವವರಿಗೆ ಏನು ಅರ್ಹತೆ ಇರಬೇಕೆಂದು ಈ ವರೆಗೆ ಹೇಳಿಲ್ಲ.
`ಕಾಸಿಗಾಗಿ ಸುದ್ದಿ' ಹಗರಣದಲ್ಲಿ ಭಾಗಿಯಾದವರು ಪತ್ರಕರ್ತರಲ್ಲ, ಕೆಲವು ದೊಡ್ಡ ಮಾಧ್ಯಮಸಂಸ್ಥೆಗಳ ಮಾಲೀಕರು. ಪಿಸಿಐ ಕಪಾಟಿನಲ್ಲಿ ದೂಳು ತಿನ್ನುತ್ತಿರುವ ಅವರದ್ದೇ ಸಂಸ್ಥೆಯ ತನಿಖಾ ವರದಿಯನ್ನು ತಿರುವುಹಾಕಿದರೆ ನ್ಯಾ.ಕಟ್ಜು ಅವರಿಗೆ ಸತ್ಯ ಗೊತ್ತಾದೀತು. ಎರಡನೆಯದಾಗಿ `ರಾಡಿಯಾ ಟೇಪ್' ಹಗರಣದಲ್ಲಿ ಆರೋಪ ಕೇಳಿಬಂದ ಪ್ರಖ್ಯಾತ ಪತ್ರಕರ್ತರಾದ ವೀರ್ ಸಾಂಘ್ವಿ, ಬರ್ಖಾದತ್ ಮೊದಲಾದವರಲ್ಲಿ ಯಾವ ಶೈಕ್ಷಣಿಕ ಅರ್ಹತೆ, ತರಬೇತಿಯ ಕಮ್ಮಿ ಇತ್ತು?
ಹುಟ್ಟಿನಿಂದ ಮಾತ್ರ ಪತ್ರಕರ್ತನಾಗಲು ಸಾಧ್ಯ ಎನ್ನುವ ಅಭಿಪ್ರಾಯದಂತೆ ಶಿಕ್ಷಣ ಮತ್ತು ತರಬೇತಿಯಿಂದ ಮಾತ್ರ ಪತ್ರಕರ್ತನಾಗಲು ಸಾಧ್ಯ ಎನ್ನುವ ಅಭಿಪ್ರಾಯವೂ ಬಾಲಿಶತನದ್ದು. ಕನಿಷ್ಠ ಪದವಿಯನ್ನೂ ಪಡೆಯಲಾಗದ ವಿನೋದ್ ಮೆಹ್ತಾ, ಪತ್ರಿಕೋದ್ಯಮವನ್ನೇ ಓದದೆ ಇರುವ ಅರುಣ್‌ಶೌರಿ ಮೊದಲಾದವರು ಯಶಸ್ವಿ ಸಂಪಾದಕರಾಗಿರುವ ಉದಾಹರಣೆಗಳು ಕಣ್ಣಮುಂದಿವೆ.
ಈಗಿನ ಜನಾಂಗ ಗೌರವದಿಂದ ನೆನಪು ಮಾಡಿಕೊಳ್ಳುವ ಹಳೆಯ ಪೀಳಿಗೆಯ ಬಹುತೇಕ ಹಿರಿಯ ಪತ್ರಕರ್ತರು ಪತ್ರಿಕೋದ್ಯಮವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿದವರಲ್ಲ. ಅವಸರದ ಸೃಷ್ಟಿ ಎಂದೇ ವ್ಯಾಖ್ಯಾನಿಸಲಾಗುವ ಪತ್ರಿಕಾ ಬರವಣಿಗೆಗಳು ಸೃಜನಶೀಲವಾದುದಲ್ಲ ಎನ್ನುವವರಿದ್ದಾರೆ. ಪತ್ರಿಕೋದ್ಯಮವನ್ನು ಪ್ರವೇಶಿಸಿರುವ ತಂತ್ರಜ್ಞಾನ ಇಂತಹ ಟೀಕೆ-ಟಿಪ್ಪಣಿಗಳಿಗೆ ಇನ್ನಷ್ಟು ಅವಕಾಶ ನೀಡಿದೆ. ಭಾಷಾಂತರದ ಸಾಫ್ಟ್‌ವೇರ್ ಕೂಡಾ ಲಭ್ಯ ಇರುವುದರಿಂದ ಕಂಪ್ಯೂಟರ್ ಜ್ಞಾನದ ಬಲದಿಂದಲೇ ಪತ್ರಕರ್ತನಾಗಲು ಸಾಧ್ಯ ಎನ್ನುವ ಅಭಿಪ್ರಾಯವೂ ಹೊಸಪೀಳಿಗೆಯ ಪತ್ರಕರ್ತರಲ್ಲಿದೆ. ಪತ್ರಕರ್ತನ ವೃತ್ತಿಯಲ್ಲಿ ಬರವಣಿಗೆಯ ಕಲೆಯಷ್ಟೇ ತಂತ್ರಜ್ಞಾನ ಕೂಡಾ ಮುಖ್ಯವಾಗುತ್ತಿದೆ.
ಎಲ್ಲರೂ ಮಾಧ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳೆರಡರಲ್ಲಿಯೂ ಯಶಸ್ಸು ಕಂಡ ಅರ್ನೆಸ್ಟ್ ಹೆಮ್ಮಿಂಗ್ವೆಯಂತಹ ಪತ್ರಕರ್ತರಾಗಲು ಸಾಧ್ಯ ಇಲ್ಲ ಎನ್ನುವುದು ನಿಜವಾದರೂ ಬರವಣಿಗೆಯ ಶಕ್ತಿ ಇಲ್ಲದವರು  ಯಶಸ್ವಿ ಪತ್ರಕರ್ತರಾಗಿ ಬೆಳೆಯುವುದು ಕಷ್ಟ, ಅವರು ಹೆಚ್ಚೆಂದರೆ ಕಾರಕೂನ ಪತ್ರಕರ್ತರಾಗಬಹುದು ಅಷ್ಟೇ. ಬರವಣಿಗೆ ಎನ್ನುವುದು ಸ್ವಂತ ಆಸಕ್ತಿಯಿಂದ ಸಿದ್ದಿಸಿಕೊಳ್ಳಬೇಕಾದ ಕಲೆ, ಅದನ್ನು ಶಿಕ್ಷಣ ಇಲ್ಲವೇ ತರಬೇತಿಯಿಂದ ಒಲಿಸಿಕೊಳ್ಳಲಾಗದು ಎನ್ನುವುದನ್ನು ನ್ಯಾ.ಕಟ್ಜು ಅವರಿಗೆ ತಿಳಿಸಿ ಹೇಳುವವರು ಯಾರು?
ಸಮಕಾಲೀನ ವಿದ್ಯಮಾನಗಳಿಗೆ ಆಗಾಗ ಪ್ರತಿಕ್ರಿಯಿಸುವ ಮೂಲಕ ಪುರೋಗಾಮಿ ಚಿಂತಕನೆಂಬಂತೆ ಬಿಂಬಿಸಿಕೊಳ್ಳುತ್ತಿರುವ ನ್ಯಾ.ಕಟ್ಜು ಅವರು ಸಾಂಪ್ರದಾಯಿಕವಾದ ಶಿಕ್ಷಣದ ಬಗ್ಗೆ ಇಷ್ಟೊಂದು ಭರವಸೆಯನ್ನು ಇಟ್ಟುಕೊಂಡಿರುವುದೇ ಅಚ್ಚರಿ ಹುಟ್ಟಿಸುತ್ತದೆ. ಶಿಕ್ಷಿತರು, ಬುದ್ದಿವಂತರು ಮಾಡಿದಷ್ಟು ಅನ್ಯಾಯ, ಅಕ್ರಮಗಳನ್ನು ಅನಕ್ಷರಸ್ಥರು ಮತ್ತು ದಡ್ಡರು ಮಾಡಿಲ್ಲ ಎನ್ನುವುದು ತೀರಾ ಸರಳೀಕೃತ ಹೇಳಿಕೆ ಎಂದು ಅನಿಸಿದರೂ ಸಾಬೀತುಪಡಿಸಲು ಹೊರಟರೆ ಪುರಾವೆಗಳು ಊರೆಲ್ಲ ಸಿಗುತ್ತವೆ. ವ್ಯತ್ಯಾಸವೆಂದರೆ ಅನಕ್ಷರಸ್ಥರು, ದಡ್ಡರು ತಮಗೆ ತಾವೇ ಅನ್ಯಾಯ ಮಾಡಿಕೊಂಡು ಕಷ್ಟಕಾರ್ಪಣ್ಯಗಳಲ್ಲಿ ನರಳಾಡಿದರೆ, ಶಿಕ್ಷಿತರು, ಬುದ್ದಿವಂತರು ಊರಿಗೆಲ್ಲ ಅನ್ಯಾಯ ಮಾಡಿ ತಾವು ಸುಖವಾಗಿರಲು ನೋಡುತ್ತಾರೆ.
ಸ್ವಾತಂತ್ರ್ಯ ಪಡೆದ ಪ್ರಾರಂಭದ ದಿನಗಳಲ್ಲಿ ಮಾತ್ರವಲ್ಲ ಈಗಲೂ ಶಿಕ್ಷಣವೇ `ಸರ್ವರೋಗಕ್ಕೆ ರಾಮಬಾಣ' ಎಂಬ ಅಭಿಪ್ರಾಯ ಇದೆ. ಬಡತನ, ಅನಾರೋಗ್ಯ, ಮೂಢನಂಬಿಕೆ, ಜಾತೀಯತೆ, ಕೋಮುವಾದ, ಅಪರಾಧ ಹೀಗೆ ಎಲ್ಲ ಬಗೆಯ ಸಾಮಾಜಿಕ ಅನಿಷ್ಟಗಳಿಗೆ ಶಿಕ್ಷಣವೊಂದೇ ಪರಿಹಾರ ಎಂದು ರಾಜಕೀಯ ನಾಯಕರು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜಕ್ಕಾಗಿ ಹಂಬಲಿಸುವ ಪ್ರಜ್ಞಾವಂತ ಹಿರಿಯರು ಕೂಡಾ ಹೇಳುತ್ತಲೇ ಬಂದಿದ್ದಾರೆ. ಆದರೆ ದೇಶ ದಾಟಿ ಬಂದ 65 ವರ್ಷಗಳ ಹಾದಿಗೆ ಕಣ್ಣಾಡಿಸಿದರೆ ಕಾಣುವ ಚಿತ್ರವೇ ಬೇರೆ.
ಬಡತನದ ಪ್ರಮಾಣ ಅಲ್ಪಪ್ರಮಾಣದಲ್ಲಿ ಕಡಿಮೆಯಾಗಿರಬಹುದು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸ್ಪಲ್ಪಮಟ್ಟಿಗೆ ಸುಧಾರಣೆಯಾಗಿರಲೂ ಬಹುದು. ಆದರೆ ಉಳಿದ ಅನಿಷ್ಠಗಳು  ಉಲ್ಭಣಗೊಳ್ಳುತ್ತಿರುವುದು  ಮಾತ್ರವಲ್ಲ ಹಳೆಯದರ ಜತೆಗೆ ಹೊಸ ಪಿಡುಗುಗಳು ಹುಟ್ಟಿಕೊಂಡಿವೆ. ಕುಕ್ಕೆಸುಬ್ರಹ್ಮಣ್ಯದಲ್ಲಿ ಎಂಜಲೆಲೆಯ ಮೇಲೆ ಉರುಳಾಡುತ್ತಿರುವವರು, ಟಿವಿಚಾನೆಲ್‌ಗಳಲ್ಲಿ  ಜ್ಯೋತಿಷಿ ಒದರುತ್ತಿರುವ ಸುಳ್ಳು ಭವಿಷ್ಯಗಳನ್ನು ಕೇಳಲು ಮತ್ತು ಅದರಂತೆ ನಡೆದುಕೊಳ್ಳಲು ಮೈಯೆಲ್ಲ ಕಣ್ಣು-ಕಿವಿಯಾಗಿ ಟಿವಿ ಮುಂದೆ ಕೂತಿರುವವರಲ್ಲಿ ಹೆಚ್ಚಿನವರು ಶಿಕ್ಷಿತರು. ಇವರಲ್ಲಿ ವೈದ್ಯರು, ಶಿಕ್ಷಕರು,ವಿಜ್ಞಾನಿಗಳು ಎಲ್ಲರೂ ಸೇರಿದ್ದಾರೆ.
ಕಳೆದೆರಡು ದಶಕಗಳಲ್ಲಿ ದೇಶದಲ್ಲಿ ನಡೆದ ಭ್ರಷ್ಟಾಚಾರದ ಹಗರಣಗಳಲ್ಲಿ ಭಾಗಿಯಾದವರ ಶೈಕ್ಷಣಿಕ ಅರ್ಹತೆಯನ್ನು ಯಾರಾದರೂ ಹುಡುಕಿ ತೆಗೆದು ಪಟ್ಟಿಮಾಡಿದರೆ ಅಪರಾಧ ನಡೆಸಲು ಬೇಕಾಗಿರುವ ಒಂದು ಅರ್ಹತೆ ಶಿಕ್ಷಣ ಇರಬಹುದೇ ಎಂಬ ಅನುಮಾನ ಹುಟ್ಟಲು ಸಾಧ್ಯ. ಪತ್ರಕರ್ತರನ್ನು ಈ ಎಲ್ಲ ಬೆಳವಣಿಗೆಗಳಿಂದ ದೂರ ಇಟ್ಟು ನೋಡಲಾಗುವುದಿಲ್ಲ.
ನ್ಯಾ.ಕಟ್ಜು ಅವರು ನಂಬಿರುವಂತೆ ಇಂದಿನ ಮಾಧ್ಯಮರಂಗವನ್ನು ಕಾಡುತ್ತಿರುವ ಬಹುಮುಖ್ಯ ಸಮಸ್ಯೆ ಕೇವಲ ಪತ್ರಕರ್ತರ ಅರ್ಹತೆ ಇಲ್ಲವೇ ತರಬೇತಿಯ ಕೊರತೆ ಖಂಡಿತ ಅಲ್ಲ. ರಾಷ್ಟ್ರಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಇಂದಿನ ಬಹುಪಾಲು ಪತ್ರಿಕೆಗಳು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿಯೇ ಪತ್ರಕರ್ತರನ್ನು ನೇಮಿಸಿಕೊಳ್ಳುತ್ತವೆ. ವಶೀಲಿ ಮಾಡಿ ಸೇರಿಕೊಳ್ಳುವವರಿಗೂ ಕನಿಷ್ಠ ವಿದ್ಯಾರ್ಹತೆ ಇರಲೇ ಬೇಕಾಗುತ್ತದೆ.
ತೀರಾ ಸ್ಥಳೀಯವಾದ ಪತ್ರಿಕೆ-ಚಾನೆಲ್‌ಗಳನ್ನು ಹೊರತುಪಡಿಸಿ ಮಾಧ್ಯಮರಂಗಕ್ಕೆ ಪ್ರವೇಶಿಸುವವರೆಲ್ಲರ  ಕೈಯಲ್ಲಿ ಪದವಿ ಇಲ್ಲವೆ ಸ್ನಾತಕೋತ್ತರ ಪದವಿ ಇರುತ್ತದೆ. ಸೇರ್ಪಡೆಯಾದ ನಂತರ ತರಬೇತಿಯನ್ನು ಪಡೆಯುತ್ತಾರೆ, ಇಂದಿನ ಅಗತ್ಯವಾದ ಕಂಪ್ಯೂಟರ್ ಜ್ಞಾನವೂ ಅವರಲ್ಲಿರುತ್ತದೆ. ಕಾಗುಣಿತ ತಪ್ಪಿಲ್ಲದೆ ಬರೆಯುವುದನ್ನೂ ಕಲಿತಿರುತ್ತಾರೆ. ನ್ಯಾ.ಕಟ್ಜು ಅವರು ನಿರೀಕ್ಷಿಸುತ್ತಿರುವ ಪತ್ರಿಕೋದ್ಯಮದ ಗುಣಮಟ್ಟವನ್ನು ಎತ್ತಿಹಿಡಿಯುವ ಪತ್ರಕರ್ತನಾಗಲು ಇಷ್ಟು ಅರ್ಹತೆ ಮತ್ತು ತರಬೇತಿ ಸಾಕೆ? ಒಬ್ಬ ಒಳ್ಳೆಯ ಪತ್ರಕರ್ತನನ್ನು ರೂಪಿಸುವುದು ಕೇವಲ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿ ಅಲ್ಲ. ಇದರ ಜತೆಗೆ ಎಲ್ಲ ಕ್ಷೇತ್ರಗಳ ವೃತ್ತಿಪರರಂತೆ ಪತ್ರಕರ್ತರಲ್ಲಿ ಪ್ರಾಮಾಣಿಕತೆ, ವೃತ್ತಿನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿ ಇರಬೇಕಾಗುತ್ತದೆ. ವೈಯಕ್ತಿಕವಾಗಿ ಅಳವಡಿಸಿಕೊಳ್ಳಬೇಕಾದ ಈ ಗುಣಗಳನ್ನು ಶಿಕ್ಷಣ ಇಲ್ಲವೇ ತರಬೇತಿಯಿಂದ ನೆಟ್ಟು ಬೆಳೆಸಲು ಸಾಧ್ಯವೇ?.
ನ್ಯಾ.ಕಟ್ಜು ಪತ್ರಕರ್ತರು ಹೊಂದಿರಬೇಕಾದ ಅರ್ಹತೆ ಬಗ್ಗೆ ಪ್ರತಿಪಾದನೆ ಮಾಡುವಾಗಲೂ ತಪ್ಪು ಪ್ರಶ್ನೆಯನ್ನು ಎತ್ತಿಕೊಂಡಿದ್ದಾರೆ. ಇದು ಅರ್ಥವಾಗಬೇಕಾದರೆ ಇಂದಿನ ವಿಶ್ವವಿದ್ಯಾಲಯಗಳಿಂದ ಪತ್ರಿಕೋದ್ಯಮ ಶಿಕ್ಷಣ ಪಡೆದು ಬಂದವರನ್ನು ಕರೆದು ಅವರು ಮಾತನಾಡಿಸಬೇಕು. ಈ ಬಡಪಾಯಿ ವಿದ್ಯಾರ್ಥಿಗಳನ್ನು ದೂರಿಯೂ ಏನೂ ಪ್ರಯೋಜನ ಇಲ್ಲ. ಯಾವುದೋ ಓಬಿರಾಯನ ಕಾಲದ ಪಠ್ಯಕ್ರಮವನ್ನು ಓದಿ ಪ್ರಾಧ್ಯಾಪಕರಾಗಿ ನೇಮಕಗೊಂಡವರು ಅದೇ ಹಳೆಯ ಪಠ್ಯವನ್ನು ಹಿಡಿದುಕೊಂಡು ಮಾಡುವ ಪಾಠವನ್ನು ಕೇಳುವ ವಿದ್ಯಾರ್ಥಿಗಳಿಂದ ವೃತ್ತಿಗೆ ಅವಶ್ಯಕವಾದ ಯಾವ ಅರ್ಹತೆಯನ್ನು ನಿರೀಕ್ಷಿಸಲು ಸಾಧ್ಯ?
  ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಲ್ಲಿ ಎಷ್ಟು ಮಂದಿಗೆ ಮಾಧ್ಯಮರಂಗದ ಪ್ರತ್ಯಕ್ಷ ಅನುಭವ ಇದೆ? ಅವರಲ್ಲಿ ಎಷ್ಟು ಮಂದಿ ಪತ್ರಿಕಾ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ? ಪ್ರಾಯೋಗಿಕವಾದ ಅನುಭವವೇ ಇಲ್ಲದ ಇವರು ಎಂತಹ ವೃತ್ತಿಪರ ಪತ್ರಕರ್ತರನ್ನು ಸೃಷ್ಟಿಮಾಡಬಲ್ಲರು?
ಇಂದು ಬಹಳಷ್ಟು ವಿದ್ಯಾರ್ಥಿಗಳು ಪತ್ರಕರ್ತರಾಗಬಯಸುತ್ತಿರುವುದು ಆಯ್ಕೆಯಿಂದಲ್ಲ. ಬೇರೆ ಯಾವ ವಿಷಯದಲ್ಲಿಯೂ ಸೀಟು ಸಿಗಲಿಲ್ಲವೆನ್ನುವ ಕಾರಣಕ್ಕೆ ಪತ್ರಿಕೋದ್ಯಮವನ್ನು ಆರಿಸಿಕೊಂಡವರೇ ಹೆಚ್ಚು. ಪತ್ರಿಕೋದ್ಯಮ ಶಿಕ್ಷಣ ಅವರಲ್ಲಿ ವೃತ್ತಿ ಬಗ್ಗೆ ಆಸಕ್ತಿಯನ್ನು ಹುಟ್ಟಿಸದೆ ಇರುವುದರಿಂದ ಅವರ ಪಾಲಿಗೆ ಪತ್ರಕರ್ತನ ವೃತ್ತಿ ಎಂದರೆ ಅದು ಹೊಟ್ಟೆಪಾಡಿಗಾಗಿ ಇರುವ ನೂರೆಂಟು ವೃತ್ತಿಗಳಲ್ಲೊಂದು ಅಷ್ಟೆ. ಇದರಿಂದಾಗಿ ಆ ವೃತ್ತಿಗಳಲ್ಲಿ ಕಾಣಿಸಿಕೊಂಡಿರುವ ಪಿಡುಗುಗಳೆಲ್ಲ ಮಾಧ್ಯಮರಂಗಕ್ಕೂ ತಗಲಿವೆ.
ಪತ್ರಕರ್ತರಾಗಲು ಕಲಿತ ಶಿಕ್ಷಣ ನೆರವಾಗಿದೆಯೇ ಎಂಬ ಪ್ರಶ್ನೆಯನ್ನು ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳ ಉತ್ಪನ್ನಗಳಾದ ಪತ್ರಕರ್ತರನ್ನು ಕೇಳಿದರೆ ಬಹುಪಾಲು ಮಂದಿ ಉತ್ತರಿಸದೆ ತಲೆತಗ್ಗಿಸುತ್ತಾರೆ. ಶಿಕ್ಷಣವನ್ನು ಪತ್ರಕರ್ತರ ಅರ್ಹತೆಯ ಮಾನದಂಡವನ್ನಾಗಿ ಮಾಡಲು ಹೊರಟವರು ಮೊದಲು ಪತ್ರಿಕೋದ್ಯಮ ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸಬೇಕಾಗುತ್ತದೆ. ನ್ಯಾಯಮೂರ್ತಿ ಕಟ್ಜು ಅವರು ಮಾಧ್ಯಮರಂಗಕ್ಕೆ ತಗಲಿರುವ ರೋಗದ ಕಾರಣವನ್ನೇ ಹುಡುಕಲು ವಿಫಲರಾಗಿದ್ದಾರೆ. ರೋಗನಿದಾನವೇ ತಪ್ಪಾಗಿಬಿಟ್ಟರೆ ಯಾವ ಔಷಧಿಯಿಂದಲೂ ಕಾಯಿಲೆಯನ್ನು ಗುಣಪಡಿಸಲು ಸಾಧ್ಯ ಇಲ್ಲ.

Sunday, March 10, 2013

ಬಿಜೆಪಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಣದ ಕೈಗಳ ಕಾಟ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರು ಬಂದು ಇಲ್ಲಿನ ಪಂಚತಾರಾ ಹೊಟೇಲಲ್ಲಿ ಸಭೆ ನಡೆಸಿ ಏನೆಲ್ಲ ಕಸರತ್ತು ನಡೆಸಿದರೂ ಪಕ್ಷದ ನೂತನ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಲು ಸಾಧ್ಯವಾಗದೆ ಹೋದುದರಲ್ಲಿ ಆಶ್ಚರ್ಯವೇನಿಲ್ಲ.
ಸಮಸ್ಯೆಯ ಮೂಲ ಆ ಸಭೆಯಲ್ಲಿದ್ದ ನಾಯಕರಲ್ಲ, ಅಲ್ಲಿ ಇಲ್ಲದೆ ಇದ್ದ ನಾಯಕರು. ಮೊದಲನೆಯದಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ಎರಡನೆಯದಾಗಿ ಸಂಘ ಪರಿವಾರದ ನಾಯಕರು, ಮೂರನೆಯದಾಗಿ ಅಲ್ಲಿ ಇದ್ದೂ ಇಲ್ಲದಂತಿದ್ದು ತನ್ನದೇ ಲೆಕ್ಕಾಚಾರದಲ್ಲಿ ಮುಳುಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್.
ನಾಯಕನ ಆಯ್ಕೆಯಲ್ಲಿ ಬಿಜೆಪಿ ಎದುರಿಸುತ್ತಿರುವ ಕಷ್ಟಗಳನ್ನು ಅರ್ಥಮಾಡಿಕೊಳ್ಳಬಹುದು. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ತಾನೇ ಬೆಳೆಸಿದ ನಾಯಕ ಹಠಾತ್ತನೆ ಪಕ್ಷ ಬಿಟ್ಟು ಹೋದಾಗ ನಿರ್ಮಾಣವಾಗಿರುವ ನಿರ್ವಾತವನ್ನು ತುಂಬುವುದು ಸುಲಭದ ಕೆಲಸ ಅಲ್ಲ.
ಬಿ.ಎಸ್.ಯಡಿಯೂರಪ್ಪ ಎಂಬ ನಾಯಕನ ವ್ಯಕ್ತಿತ್ವವೇ ಅಂತಹದ್ದು. ಪಕ್ಷ ತನ್ನ ನಿಯಂತ್ರಣಕ್ಕೆ ಬಂದ ನಂತರ ಎರಡನೆ ಸಾಲಿನ ಯಾವ ನಾಯಕರನ್ನೂ ಅವರು ಬೆಳೆಯಲು ಬಿಡಲಿಲ್ಲ. ಮುಂದೊಂದು ದಿನ ತನ್ನ ಹಾದಿಗೆ ಮುಳ್ಳಾಗಬಹುದೆಂಬ ದೂರಾಲೋಚನೆಯಿಂದ 2008ರ ಚುನಾವಣೆಯ ಗೆಲುವಿನ ನಂತರ ಜಗದೀಶ್ ಶೆಟ್ಟರ್ ಅವರನ್ನೇ ಸಂಪುಟ ಸೇರದಂತೆ ತಡೆದವರು ಬಿಎಸ್‌ವೈ.
ಪಕ್ಷದೊಳಗೆ ಇನ್ನೊಬ್ಬ ಲಿಂಗಾಯತ ನಾಯಕ ತನಗೆ ಸವಾಲಾಗಬಾರದು, ತಾನೇ ಜಾತಿಯ ಪ್ರಶ್ನಾತೀತ ನಾಯಕನಾಗಬೇಕೆಂಬ ಉದ್ದೇಶದಿಂದ ಲಿಂಗಾಯತ ಮಠಗಳಿಗೆ ತೆರಿಗೆಹಣವನ್ನು ಸುರಿದದ್ದು ಕೂಡಾ ಇದೇ ಕಾರಣಕ್ಕೆ. ಇದರಿಂದಾಗಿ ಬಿಜೆಪಿ ದಿಕ್ಕೆಟ್ಟ ಸ್ಥಿತಿಯಲ್ಲಿದೆ. ಬಿಎಸ್‌ವೈ ಪಕ್ಷದ ನಾಯಕರಾಗಿ ಉಳಿಯಲಿಲ್ಲ, ಅವರ ಗೈರುಹಾಜರಿಯಲ್ಲಿ ಅವರಿಗೆ ಸರಿಸಾಟಿಯಾಗಬಲ್ಲ ಬೇರೆ ನಾಯಕರೂ ಇಲ್ಲ.
ಎರಡನೆಯದಾಗಿ ಸಂಘ ಪರಿವಾರದ ನಾಯಕರು. ಬಿಜೆಪಿಗೆ ಉಳಿದ ರಾಜಕೀಯ ಪಕ್ಷಗಳಂತೆ ಇರುವುದು ಒಂದು ಹೈಕಮಾಂಡ್ ಅಲ್ಲ, ಇನ್ನೊಂದೂ ಇದೆ. ಅದು ರಾಷ್ಟ್ರೀಯ ಸ್ವಯಂಸೇವಕ ಸಂಘ. ಬಿಜೆಪಿಯ ನಾಯಕನ ಆಯ್ಕೆಗೂ ತಮಗೂ ಸಂಬಂಧ ಇಲ್ಲ ಎಂದು ಸಂಘದ ನಾಯಕರು ಎಷ್ಟೇ ಕೂಗಿಹೇಳಿದರೂ ನಂಬುವವರು ಯಾರು?
ಸಂಬಂಧ ಇಲ್ಲದೆ ಇದ್ದರೆ ಸಂಘದ ಪ್ರತಿನಿಧಿಯನ್ನು ಬಿಜೆಪಿಯ ಸಂಘಟನೆಯ ಕೆಲಸಕ್ಕೆ ಮಾತ್ರ ಎರವಲು ಸೇವೆ ರೂಪದಲ್ಲಿ ಯಾಕೆ ಕಳುಹಿಸಿಕೊಡಲಾಗುತ್ತಿದೆ? ಈ ಸಂಬಂಧದ ಸತ್ಯ ಇನ್ನಷ್ಟು ತಿಳಿದುಕೊಳ್ಳಬೇಕಾದರೆ ಯಡಿಯೂರಪ್ಪ ಮತ್ತು ಅವರ ಪಕ್ಷದ ವಕ್ತಾರ ವಿ.ಧನಂಜಯ ಕುಮಾರ್ ಕಳೆದೆರಡು ತಿಂಗಳುಗಳಿಂದ ನೀಡುತ್ತಿರುವ ಹೇಳಿಕೆಗಳಲ್ಲಿ ಯಾರ ಹೆಸರುಗಳು ಪ್ರಸ್ತಾಪವಾಗುತ್ತಿದೆ ಎಂಬುದನ್ನು ನೋಡಬಹುದು.
ಪಕ್ಷದ ಅಧ್ಯಕ್ಷಸ್ಥಾನದ ಆಯ್ಕೆ ಕಸರತ್ತು ಇಷ್ಟೊಂದು ಜಟಿಲಗೊಳ್ಳಲು ಸಂಘ ಪರಿವಾರ ಎಂಬ ಅಗೋಚರ ಶಕ್ತಿ ಕಾರಣ ಎನ್ನುವುದು ನಿರ್ವಿವಾದ. ಬಿಜೆಪಿ ಅಧಿಕಾರ ಗಳಿಸದೆ ವಿರೋಧಪಕ್ಷದಲ್ಲಿ ಕೂತರೂ ಸರಿ, ಯಾವುದೇ ಕಾರಣಕ್ಕೂ ಪಕ್ಷ ತನ್ನ ನಿಯಂತ್ರಣ ಮೀರಿ ಹೋಗಬಾರದೆನ್ನುವುದು ಸಂಘದ ನಾಯಕರ ಲೆಕ್ಕಾಚಾರ.
ಎನ್‌ಡಿಎ ಅಧಿಕಾರದಲ್ಲಿದ್ದಾಗ ಅಟಲಬಿಹಾರಿ ವಾಜಪೇಯಿ ಮತ್ತು ಲಾಲ್‌ಕೃಷ್ಟ ಅಡ್ವಾಣಿಯವರನ್ನು ಯಾವ ರೀತಿ ಆರ್‌ಎಸ್‌ಎಸ್ ಕಾಡಿತ್ತು, ಈಗಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದು ಜನರ ಕಣ್ಣಮುಂದಿದೆ. ರಾಷ್ಟ್ರಮಟ್ಟದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ  ನಿದ್ದೆಗೆಡಿಸುತ್ತಿರುವ ಈ ಸಂದರ್ಭದಲ್ಲಿ ಸಂಘ ಪರಿವಾರ ಯಾವ ರಾಜ್ಯದಲ್ಲಿಯೂ ಇನ್ನೊಬ್ಬ ಮೋದಿಯೋ, ಯಡಿಯೂರಪ್ಪನೋ ಬೆಳೆಯುವುದನ್ನು ಖಂಡಿತ ಇಷ್ಟಪಡಲಾರದು. ಯಡಿಯೂರಪ್ಪನವರಿಗೆ ಸಮನಾದ ಇನ್ನೊಬ್ಬ ನಾಯಕ ಪಕ್ಷದಲ್ಲಿ ಇಲ್ಲ ಎನ್ನುವುದು ಎಷ್ಟು ನಿಜವೋ, ಅಂತಹ ನಾಯಕ ಸಂಘ ಪರಿವಾರಕ್ಕೆ ಬೇಕಿಲ್ಲ ಎನ್ನುವುದೂ ಅಷ್ಟೇ ನಿಜ.
ಸಂಘ ಪರಿವಾರದ ಮನಸ್ಥಿತಿಯನ್ನು ಇನ್ನಷ್ಟು ಅರ್ಥಮಾಡಿಕೊಳ್ಳಬೇಕಾದರೆ ಸ್ಪರ್ಧೆಯಲ್ಲಿರುವ ಇಬ್ಬರು ನಾಯಕರನ್ನು ಗಮನಿಸಬಹುದು. ಡಿ.ವಿ.ಸದಾನಂದ ಗೌಡರು ಕಳೆದ ಚುನಾವಣೆಯಲ್ಲಿ ಪಕ್ಷ ಗೆದ್ದಾಗ ಅಧ್ಯಕ್ಷರಾಗಿದ್ದವರು, ಅದರ ನಂತರ ಮುಖ್ಯಮಂತ್ರಿಯೂ ಆಗಿಬಿಟ್ಟರು. ಅಧಿಕಾರದಲ್ಲಿದ್ದದ್ದು ಅಲ್ಪಕಾಲವಾದರೂ ಹೆಸರು ಕೆಡಿಸಿಕೊಳ್ಳಲಿಲ್ಲ, ಬಗೆಬಗೆಯ ಒತ್ತಡಗಳ ನಡುವೆಯೂ ತೃಪ್ತಿಕರವಾದ ಆಡಳಿತ ಕೊಟ್ಟವರು.
ರಾಜಕೀಯ ಕಾರಣಗಳಿಗಾಗಿ ಇತ್ತೀಚೆಗೆ ಒಕ್ಕಲಿಗ ಜಾತಿ ಜತೆ ಗುರುತಿಸಿಕೊಂಡರೂ ಜಾತಿವಾದಿ ಎಂಬ ಹಣೆಪಟ್ಟಿ ಬೀಳದಂತೆ ಎಚ್ಚರಿಕೆ ವಹಿಸಿದವರು. ಪಕ್ಷದಲ್ಲಿರುವ ಒಕ್ಕಲಿಗರು ಕೂಡಾ ಗೌಡರನ್ನು ತಮ್ಮ ನಾಯಕನೆಂದು ಹೃತ್ಪೂರ್ವಕವಾಗಿ ಒಪ್ಪಿಕೊಳ್ಳದೆ ಇರುವುದರಿಂದ ಬೇರೆ ಜಾತಿ ನಾಯಕರಲ್ಲಿಯೂ ಅವರ ಬಗ್ಗೆ ಹೆಚ್ಚಿನ ವಿರೋಧ ಇಲ್ಲ. ಇಷ್ಟೆಲ್ಲ ಅನುಕೂಲಕರ ಅಂಶಗಳಿರುವುದೇ ಸದಾನಂದ ಗೌಡರಿಗೆ ಮುಳುವಾಗಿದೆ. ಅಧ್ಯಕ್ಷರಾಗಿಬಿಟ್ಟರೆ ಗೌಡರು ಸಂಪೂರ್ಣವಾಗಿ ತಮ್ಮ ಹಿಡಿತದಲ್ಲಿ ಇರಲಾರರು ಎಂಬ ಅಸುರಕ್ಷತೆ ಸಂಘದ ನಾಯಕರಲ್ಲಿದ್ದ ಹಾಗಿದೆ.
ವೈಯಕ್ತಿಕ ಇಮೇಜ್ ಬಗ್ಗೆ ಸೂಕ್ಷ್ಮಮತಿಯಾಗಿರುವ ಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಂಘ ಪರಿವಾರ ಮುಖ್ಯವಾಗಿ ಕರಾವಳಿಯ `ಪ್ರಭಾವಳಿ' ನಾಯಕರು ಸಲ್ಲಿಸಿದ ಬೇಡಿಕೆಗಳ ಪಟ್ಟಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳದೆ ಇರುವುದೂ ಅವರಿಗೆ ವಿರುದ್ಧವಾಗಿದೆಯಂತೆ. ಹೀಗಲ್ಲದಿದ್ದರೆ ತಾನೇ ಬೆಳೆಸಿದ ನಾಯಕನ ತಲೆಮೇಲಿದ್ದ ಅಭಯಹಸ್ತವನ್ನು ಸಂಘಪರಿವಾರ ಇದ್ದಕ್ಕಿದ್ದಂತೆ ಹಿಂದಕ್ಕೆ ಪಡೆಯಲು ಬೇರೆ ಕಾರಣಗಳ್ಯಾವುದೂ ಕಾಣುತ್ತಿಲ್ಲ.
ಸಂಘ ಪರಿವಾರದ ಒಳಮನಸ್ಸನ್ನು ಇನ್ನಷ್ಟು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಾದರೆ ತನ್ನ ಅಭ್ಯರ್ಥಿಯಾಗಿ ಅದು ಬಿಂಬಿಸುತ್ತಿರುವ ನಾಯಕನನ್ನು ನೋಡಬಹುದು. ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿಯವರನ್ನು ಸೋಲಿಸುವ ವರೆಗೆ ನಳಿನಿಕುಮಾರ್ ಕಟೀಲ್ ಮಂಗಳೂರು ಮಹಾನಗರಪಾಲಿಕೆಯಿಂದ ಆಚೆಗೆ ಯಾರಿಗಾದರೂ ಗೊತ್ತಿತ್ತು ಎಂದು ಅನಿಸುವುದಿಲ್ಲ. ಸಾಮಾನ್ಯವಾಗಿ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವರಲ್ಲಿ ಇರುವ ವಾಕ್ಪಟುತ್ವ ಮತ್ತು ಸಂಘಟನಾ ಚಾತುರ್ಯ ತನ್ನಲ್ಲಿದೆ ಎಂದು ಅವರು ಈ ವರೆಗೆ ಸಾಬೀತುಪಡಿಸಿಲ್ಲ. ತುಳು-ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಯಾರೂ ಕೇಳಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಬಿಜೆಪಿಯ ಕೋಟೆ ಎಂದು ಹೇಳಲಾಗುತ್ತಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದದ್ದು ಎಂಟರಲ್ಲಿ ನಾಲ್ಕು ಸ್ಥಾನಗಳನ್ನು ಮಾತ್ರ. ನಳಿನ್‌ಕುಮಾರ್ ಅವರಿಗೆ ಲೋಕಸಭಾ ಟಿಕೆಟ್ ನೀಡಲು ಅವರದ್ದೇ ಜಾತಿಯಾದ ಬಂಟರ ಮತಗಳನ್ನು ಸೆಳೆಯುವ ಒಳ ಉದ್ದೇಶವೂ ಇತ್ತು.ಆದರೆ ಹಾಲಾಡಿ ಶ್ರಿನಿವಾಸ ಶೆಟ್ಟಿಯವರಿಗೆ ಸಚಿವ ಪದವಿ ನಿರಾಕರಣೆ ಜಿಲ್ಲೆಯ ಬಂಟರು ಬಿಜೆಪಿ ವಿರುದ್ಧ ಬಂಡೇಳುವಂತೆ ಮಾಡಿದೆ.
ಇದರ ಜತೆಗೆ ಇನ್ನೊಬ್ಬ ಬಿಜೆಪಿ ನಾಯಕ ನಾಗರಾಜ ಶೆಟ್ಟಿ ಮತ್ತು ಹೊಟೇಲ್‌ಉದ್ಯಮಿ ಸದಾನಂದ ಶೆಟ್ಟಿಯವರು ಜೆಡಿ (ಎಸ್) ಸೇರಿದ್ದಾರೆ. ರಾಜ್ಯದ ಉಳಿದೆಡೆಗಳಲ್ಲಿ ಬಿಡಿ, ತವರು ಜಿಲ್ಲೆಯ ತನ್ನ ಜಾತಿಯ ಮತಗಳನ್ನೇ ಬಿಜೆಪಿಗೆ ತಂದುಕೊಡುವ ಸಾಮರ್ಥ್ಯ ನಳಿನ್‌ಕುಮಾರ್ ಕಟೀಲ್‌ಗೆ ಈಗ ಇದ್ದ ಹಾಗೆ ಇಲ್ಲ. ಹೀಗಿದ್ದರೂ ಸಂಘ ಪರಿವಾರ ನಳಿನ್‌ಕುಮಾರ್ ಬೆಂಬಲಕ್ಕೆ ನಿಲ್ಲಲು ಇರುವ ಏಕೈಕ ಕಾರಣ-'ಹೇಳಿದಂತೆ ಕೇಳಿಕೊಂಡು ಇರಬಲ್ಲ ನಮ್ಮ ಹುಡುಗ' ಎನ್ನುವುದಲ್ಲದೆ ಬೇರೇನಿದೆ?
ಬಿಜೆಪಿಯ ಮೂರನೆಯ ಸಮಸ್ಯೆಯ ಹೆಸರು ಅನಂತಕುಮಾರ್. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿಯೊಳಗೆ ನಡೆದ ತುಮುಲಗಳಲ್ಲೆಲ್ಲ ಅನಂತಕುಮಾರ್ ಕೈವಾಡದ ಆರೋಪಗಳು ಕೇಳಿಬಂದರೂ ಅದು ಬಹಿರಂಗವಾಗಿ ಚರ್ಚೆಯಾಗಿದ್ದು ಕಡಿಮೆ. ಯಡಿಯೂರಪ್ಪನವರು ಪಕ್ಷತ್ಯಜಿಸಿದ ನಂತರವಷ್ಟೇ ಅದು ಅಲ್ಲಲ್ಲಿ ಸ್ಪೋಟಗೊಂಡಿರುವುದು. ಇಂತಹ ಅನಂತಕುಮಾರ್ ತಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದು ಸ್ಪರ್ಧೆಯಲ್ಲಿರುವ ಐವರಲ್ಲಿ ಮೂವರಾದ ಪ್ರಹ್ಲಾದ ಜೋಷಿ, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ತಿಳಿದುಕೊಂಡಿದ್ದಾರೆ. ಈ ರೀತಿ ಬೆಂಬಲದ ಭರವಸೆ ನೀಡಲು ಅನಂತಕುಮಾರ್ ತಲೆಯಲ್ಲಿರುವ ಬೇರೆ ಲೆಕ್ಕಾಚಾರ ಕಾರಣ ಎಂದು ಹೇಳುವವರೂ ಇದ್ದಾರೆ.
ಜನಸಂಖ್ಯೆಯ ಶೇಕಡಾ ನಾಲ್ಕರಷ್ಟಿರುವ ಬ್ರಾಹ್ಮಣರು ಬಿಜೆಪಿಯ ನಂಬಿಕೆಯ ಮತಬ್ಯಾಂಕ್. ರಾಜ್ಯದಲ್ಲಿರುವ ಹನ್ನೊಂದು ಬ್ರಾಹ್ಮಣ ಶಾಸಕರಲ್ಲಿ ಒಂಬತ್ತು ಮಂದಿ ಇರುವುದು ಬಿಜೆಪಿಯಲ್ಲಿ. ಕನಿಷ್ಠ ಬಿಜೆಪಿಯೊಳಗೆ ಅನಂತಕುಮಾರ್ ಪ್ರಶ್ನಾತೀತವಾಗಿ ಈ ಸಮುದಾಯದ ನಾಯಕ. ಬ್ರಾಹ್ಮಣರಿಗೆ ಅವಕಾಶ ನೀಡಿಲ್ಲ ಎನ್ನುವ ಅಪವಾದ ತನ್ನ ಮೇಲೆ ಬರಬಾರದು ಎಂಬ ಕಾರಣಕ್ಕಾಗಿ ಜೋಷಿ ಅವರ ಹೆಸರನ್ನು ತೇಲಿಬಿಟ್ಟಿದ್ದಾರೆಯೇ ಹೊರತು ಈ ಬಗ್ಗೆ ಅನಂತಕುಮಾರ್ ಗಂಭೀರವಾಗಿಲ್ಲ ಎಂದು ಹೇಳಲಾಗುತ್ತಿದೆ.
ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ  ಎಂದು ಘೋಷಿಸಲಾಗಿರುವ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ ಜೋಷಿ ಒಂದೇ ಊರಿನವರಾಗಿರುವ ಕಾರಣ ಅವರ ನೇಮಕ ಸಾಧ್ಯ ಇಲ್ಲ ಎನ್ನುವುದು ಅನಂತಕುಮಾರ್ ಅವರಿಗೆ ಗೊತ್ತಿಲ್ಲವೇ? ಬ್ರಾಹ್ಮಣ ಸಮುದಾಯಕ್ಕೆ ಅವಕಾಶ ನೀಡಲೇ ಬೇಕಾದರೆ ಬಿಜೆಪಿಯಲ್ಲಿ ಈಗಲೂ ಸಾರ್ವಜನಿಕರ ಗೌರವಕ್ಕೆ ಪಾತ್ರರಾಗಿರುವ ಕೆಲವೇ ನಾಯಕರಲ್ಲಿ ಒಬ್ಬರಾದ ಸಚಿವ ಸುರೇಶ್ ಕುಮಾರ್ ಅವರ ಹೆಸರನ್ನು ಪರಿಗಣಿಸಬಹುದಿತ್ತು. ವಿಚಿತ್ರವೆಂದರೆ ಬೇರೆ ಪಕ್ಷಗಳ ನಾಯಕರು ಮತ್ತು ಮತದಾರರು ಕೂಡಾ ಒಪ್ಪಬಹುದಾದ ಸುರೇಶ್‌ಕುಮಾರ್  ಹೆಸರು ಸ್ಪರ್ಧೆಯಲ್ಲಿಯೇ ಇಲ್ಲ. ಈ ವೈಚಿತ್ರ್ಯದ ಹಿಂದೆ ತನ್ನ ಕೈವಾಡ ಇಲ್ಲ ಎಂದು ಅನಂತಕುಮಾರ್ ಹೇಳಬಹುದು.ಆದರೆ ಇಬ್ಬರ ನಡುವಿನ ಪೈಪೋಟಿಯನ್ನು ಬಲ್ಲ ಯಾರೂ ಈ ಸಮಜಾಯಿಷಿಯನ್ನು ನಂಬಲಾರರು.
ಸಚಿವ ಆರ್.ಅಶೋಕ್ ಅವರಿಗೆ ನೀಡಿರುವ ಬೆಂಬಲದಲ್ಲಿಯೂ ಅನಂತಕುಮಾರ್ ಅವರಿಗೆ ಬೇರೆ ಉದ್ದೇಶ ಇದ್ದಂತಿದೆ. ಯಡಿಯೂರಪ್ಪನವರ ವಿರೋಧದಿಂದಾಗಿ ರಾಜ್ಯದ ಪ್ರಮುಖ ಜಾತಿಯಾದ ಲಿಂಗಾಯತರು ತಮ್ಮ ಪರವಾಗಿಲ್ಲ ಎನ್ನುವುದು ಅನಂತಕುಮಾರ್ ಅವರಿಗೆ ಗೊತ್ತಿದೆ. ಆದುದರಿಂದ ತನ್ನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಕ್ಕಲಿಗರನ್ನಾದರೂ ಓಲೈಸುವುದು ಅವರಿಗೆ ಅನಿವಾರ್ಯವಾಗಿದೆ.
ಇದೇ ವೇಳೆ ತನ್ನ ಗುಂಪಿನಲ್ಲಿ ಇಲ್ಲದ ಸದಾನಂದ ಗೌಡರ ಅವಕಾಶವನ್ನು ಕೂಡಾ ತಪ್ಪಿಸಬೇಕಾಗಿದೆ. ಅಶೋಕ್ ಅವರನ್ನು ಬೆಂಬಲಿಸುವ ಮೂಲಕ ಅನಂತಕುಮಾರ್ ಒಂದೇ ಕಲ್ಲಿನಿಂದ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನ ಮಾಡಿದ್ದಾರೆ. ಅಶೋಕ್ ಅವರು ಒಕ್ಕಲಿಗರ ನಾಯಕರಾಗುವುದು ಕಷ್ಟ. ಈಗಲೂ ದೇವೇಗೌಡರೇ ಒಕ್ಕಲಿಗರ ಪ್ರಶ್ನಾತೀತ ನಾಯಕ, ಎರಡನೇ ಸ್ಥಾನದಲ್ಲಿರುವುದು ಎಚ್.ಡಿ.ಕುಮಾರಸ್ವಾಮಿ.
ಕಳೆದ ಚುನಾವಣೆಯಲ್ಲಿ ಒಕ್ಕಲಿಗರ ಪ್ರಾಬಲ್ಯ ಇರುವ ಮಂಡ್ಯ,ಹಾಸನ,ರಾಮನಗರ ಜಿಲ್ಲೆಗಳಲ್ಲಿ ಬಿಜೆಪಿಯ ಒಬ್ಬ ಶಾಸಕ ಕೂಡಾ ಆರಿಸಿ ಬರಲಿಲ್ಲ ಎನ್ನುವುದು ಗಮನಾರ್ಹ. ಇದರ ಜತೆ ಅಶೋಕ್ ಅವರಿಗೆ ಸಂಘ ಪರಿವಾರದ ಬೆಂಬಲವೂ ಇಲ್ಲ. ಈ ಕಾರಣಗಳಿಂದಾಗಿ ಅಶೋಕ್ ಅವರಿಗೆ ಅವಕಾಶ ಕಡಿಮೆ ಎನ್ನುವುದು ಅನಂತಕುಮಾರ್ ಅವರಿಗೆ ತಿಳಿದಿದೆ. ಬೆಂಬಲಿಸಿದ ಹಾಗೂ ಆಗಬೇಕು, ಅವರು ಅಧ್ಯಕ್ಷರಾಗಲೂ ಬಾರದು ಇದು ಅನಂತಕುಮಾರ್ ಲೆಕ್ಕಾಚಾರ ಇರಬಹುದು.
ಹಾಗಿದ್ದರೆ ಅನಂತಕುಮಾರ್ ಯಾರ ಪರವಾಗಿದ್ದಾರೆ ಎನ್ನುವ ಯಕ್ಷ ಪ್ರಶ್ನೆಗೆ ಸಿಗುವ ಮೊದಲ ಉತ್ತರ ಗೋವಿಂದ ಕಾರಜೋಳ. ರಾಜ್ಯದ 33 ಪರಿಶಿಷ್ಟಜಾತಿಯ ಶಾಸಕರಲ್ಲಿ 22 ಶಾಸಕರು ಇರುವುದು ಬಿಜೆಪಿಯಲ್ಲಿ. ಕಳೆದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಉಳಿದೆಲ್ಲ ಅಂಶಗಳ ಜತೆ ಅದು ನಡೆಸಿದ್ದ ಸೋಷಿಯಲ್ ಎಂಜನಿಯರಿಂಗ್ ಕೂಡಾ ಕಾರಣ. ಕಾಂಗ್ರೆಸ್ ಪಕ್ಷದಲ್ಲಿ ಪರಿಶಿಷ್ಟ ಜಾತಿಯ ನಾಯಕರು ಬಹುಸಂಖ್ಯೆಯಲ್ಲಿದ್ದರೂ ಅವರಲ್ಲಿ ಶೇಕಡಾ 90ರಷ್ಟು ಬಲಗೈ ಗುಂಪಿಗೆ ಸೇರಿದವರು. ಇದನ್ನು ಗಮನಿಸಿದ ಬಿಜೆಪಿ ಹೆಚ್ಚುಕಡಿಮೆ ಬಲಗೈ ಗುಂಪಿಗೆ ಸಮನಾದ ಸಂಖ್ಯೆಯಲ್ಲಿರುವ ಎಡಗೈ ಗುಂಪಿಗೆ ಗಾಳ ಹಾಕಿತು. ಮೊದಲು ರಮೇಶ್ ಜಿಗಜಿಣಗಿ,ನಂತರ ಕೆ.ಬಿ.ಶಾಣಪ್ಪ ಮತ್ತು ಗೋವಿಂದ ಕಾರಜೋಳ ಮೊದಲಾದ ಎಡಗೈ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿತು.
ಇದರ ಲಾಭವನ್ನೂ ಕಳೆದ ಚುನಾವಣೆಯಲ್ಲಿ ಬಿಜೆಪಿ ಪಡೆದಿದೆ. ಈ ರೀತಿ ಪಕ್ಷಕ್ಕೆ ಬಂದಿರುವ ಎಡಗೈ ಗುಂಪಿನ ದಲಿತ ನಾಯಕರು ಅನಂತಕುಮಾರ್ ಅವರಿಗೆ ನಿಷ್ಠಾವಂತರಾಗಿರುವುದು ನಿಜ. ಈ ಹಿನ್ನೆಲೆಯಲ್ಲಿ ಕಾರಜೋಳ ಅವರು ಅಧ್ಯಕ್ಷರಾಗಿಬಿಟ್ಟರೆ ತಮಗೆ ಅನುಕೂಲ ಎಂದು ಅನಂತಕುಮಾರ್ ಸಹಜವಾಗಿ ತಿಳಿದುಕೊಂಡಿದ್ದಾರೆ. ಆದರೆ ಜನತಾ ಪರಿವಾರದಿಂದ ಬಂದ `ಹೊರಗಿನವರನ್ನು' ಸಂಘ ಪರಿವಾರ ಒಪ್ಪುವುದೇ?
ಅನಂತಕುಮಾರ್ ಅವರ ಈ ಎಲ್ಲ ಲೆಕ್ಕಾಚಾರದೊಳಗೆ ಇನ್ನೊಂದು ಒಳಲೆಕ್ಕ ಇದೆ ಎಂದು ಹೇಳಲಾಗುತ್ತಿದೆ. ಅವರು ಯಾರ ಪರವಾಗಿಯೂ ಇಲ್ಲ ಅಧ್ಯಕ್ಷರಾಗಲು ತಾನೇ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುವವರೂ ಇದ್ದಾರೆ. ಮಹತ್ವಾಕಾಂಕ್ಷಿಯಾದ ಅನಂತಕುಮಾರ್ ಅವರ ಶಕ್ತಿಯ ಮೂಲ ದೆಹಲಿಯಲ್ಲಿರುವ ಎಲ್.ಕೆ.ಅಡ್ವಾಣಿ. ಬಿಜೆಪಿಯ ಬಿಕ್ಕಟ್ಟುಗಳು ಪರಿಹಾರಕ್ಕಾಗಿ ದೆಹಲಿಗೆ ಹೋದಾಗಲೆಲ್ಲ ಆ ಪರಿಹಾರ ತಮ್ಮ ಕಡೆಯಾಗುವಂತೆ ಅನಂತಕುಮಾರ್ ನೋಡಿಕೊಂಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯ ಬಿಕ್ಕಟ್ಟು ದೆಹಲಿಗೆ ರವಾನೆಯಾಗಿರುವುದರಿಂದ ಅಲ್ಲಿ ಯಾರ ಕೈವಾಡ ನಡೆಯಬಹುದೆಂಬುದನ್ನು ಊಹಿಸುವುದು ಕಷ್ಟ ಅಲ್ಲ.

Thursday, March 7, 2013

ಸುಭದ್ರ ಸರ್ಕಾರಕ್ಕೆ ಪ್ರಬುದ್ಧ ಆಶೀರ್ವಾದ

ಬೆಂಗಳೂರು: ಉತ್ತರಪ್ರದೇಶದಲ್ಲಿ ಬೀಸಿರುವ ಬದಲಾವಣೆಯ ಬಿರುಗಾಳಿ ಬಹುಜನ ಸಮಾಜ ಪಕ್ಷವನ್ನು ಕೆಡವಿಹಾಕಿದೆ, ಭಾರತೀಯ ಜನತಾ ಪಕ್ಷ ತಲೆ ಎತ್ತದಂತೆ ಮಾಡಿದೆ, ಕಾಂಗ್ರೆಸ್ ಪಕ್ಷವನ್ನು ಒಂದಿಷ್ಟು ಮುಂದಕ್ಕೆ ತಳ್ಳಿ ಕೈಬಿಟ್ಟಿದೆ ಮತ್ತು ಸಮಾಜವಾದಿ ಪಕ್ಷದ ನಾಯಕ ಮುಲಾಯಂಸಿಂಗ್ ಯಾದವ್ ಅವರನ್ನೆತ್ತಿ ಮುಖ್ಯಮಂತ್ರಿ ಸಿಂಹಾಸನದ ಮೇಲೆ ಕೊಂಡೊಯ್ದು ಕೂರಿಸಿದೆ.
ಉತ್ತರಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ನಿರೀಕ್ಷೆಯಂತೆಯೇ ಬಂದಿದ್ದರೂ `ತ್ರಿಶಂಕು ವಿಧಾನಸಭೆ~ ನಿರ್ಮಾಣವಾಗಬಹುದೆಂಬ ಭವಿಷ್ಯವನ್ನು ಮಾತ್ರ ಆ ರಾಜ್ಯದ ಮತದಾರರು ಸುಳ್ಳಾಗಿಸಿದ್ದಾರೆ. ಯಾರ ಹಂಗಿಗೂ ಬೀಳದೆ ಸ್ವಂತಬಲದಿಂದ ಸರ್ಕಾರ ರಚಿಸುವಷ್ಟು ಬಹುಮತವನ್ನು ಸಮಾಜವಾದಿ ಪಕ್ಷಕ್ಕೆ ನೀಡಿದ್ದಾರೆ. ಈ ಮೂಲಕ ಸುಭದ್ರ ಸರ್ಕಾರ ಬೇಕೆಂಬ ಆಶಯವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿ ಪ್ರಬುದ್ಧತೆಯನ್ನು ಮೆರೆದಿದ್ದಾರೆ. ಸಮಾಜವಾದಿ ಪಕ್ಷವನ್ನು `ರಿಮೋಟ್ ಕಂಟ್ರೋಲ್~ ಮೂಲಕ ನಿಯಂತ್ರಿಸಬಹುದೆಂಬ ಕಾಂಗ್ರೆಸ್ ಪಕ್ಷದ ದೂರದ ಆಲೋಚನೆಯನ್ನು ವಿಫಲಗೊಳಿಸಿದ್ದಾರೆ.
ಈ ಚುನಾವಣಾ ಫಲಿತಾಂಶ ತಕ್ಷಣದಲ್ಲಿ ರಾಷ್ಟ್ರರಾಜಕಾರಣದ ಮೇಲೆ ಪ್ರಭಾವ ಬೀರದೆ ಇದ್ದರೂ ನಿಧಾನವಾಗಿ ಮತ್ತೊಂದು ಸುತ್ತಿನ ಧ್ರುವೀಕರಣಕ್ಕೆ ಚಾಲನೆ ನೀಡಲೂಬಹುದು.ಮಹತ್ವಾಕಾಂಕ್ಷಿ ಮುಲಾಯಂಸಿಂಗ್ ಯಾದವ್ ರಾಜ್ಯರಾಜಕಾರಣಕ್ಕಷ್ಟೇ ತಮ್ಮನ್ನು ಕಟ್ಟಿಹಾಕಿಕೊಳ್ಳದೆ ಮತ್ತೆ ತೃತೀಯರಂಗವನ್ನು ಕಟ್ಟುವ ಮತ್ತು ಆ ಮೂಲಕ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತುದಿಗಾಲಲ್ಲಿ ನಿಲ್ಲಿಸುವ ಪ್ರಯತ್ನ ಮಾಡಬಹುದು. ಜುಲೈ ತಿಂಗಳಿನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆ ಹಾಗೂ ಮುಂದಿನ ವರ್ಷ ಕೆಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ತೃತೀಯರಂಗದ ಶಕ್ತಿಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಬಹುದು.
ಸಮಾಜವಾದಿ ಪಕ್ಷಕ್ಕೆ ಗೆಲುವು ನಿರೀಕ್ಷಿತವಾದರೂ ಅದರ ಪ್ರಮಾಣ ಅದನ್ನು ಅಚ್ಚರಿಗೀಡುಮಾಡಿರಲೂ ಬಹುದು. ಕಳೆದ ಹತ್ತುವರ್ಷಗಳಲ್ಲಿ ಸಮಾಜವಾದಿ ಪಕ್ಷ ಸೋತರೂ-ಗೆದ್ದರೂ ಮತಪ್ರಮಾಣ ಮಾತ್ರ ಶೇಕಡಾ 25ರಿಂದ ಕೆಳಗಿಳಿದಿರಲಿಲ್ಲ. ಅಪ್ಪ ಗಟ್ಟಿಗೊಳಿಸಿದ್ದ ಹಳೆಬೇರಿಗೆ ಹೊಸ ಚಿಗುರಿನ ರೂಪದಲ್ಲಿ ಜತೆಯಾದ ಮಗ ಅಖಿಲೇಶ್ ಯಾದವ್ ಪಕ್ಷ ಹಿಂದೆಂದೂ ಕಾಣದಂತಹ ಅಭೂತಪೂರ್ವ ಗೆಲುವನ್ನು ತಂದುಕೊಟ್ಟಿದ್ದಾರೆ.
ಇದಕ್ಕೆ ಕಾರಣಗಳು ಹಲವಾರು. ಹಾದಿ ತಪ್ಪಿಹೋಗಿದ್ದ ಮುಲಾಯಂಸಿಂಗ್ ತನ್ನನ್ನು ತಿದ್ದಿಕೊಂಡು ಮತ್ತೆ ಹಳೆಯ `ನೇತಾಜಿ~ ಆಗಿಬಿಟ್ಟರು. ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ಸಿಂಗ್ ಅವರನ್ನು ಜತೆಯಲ್ಲಿ ಸೇರಿಸಿಕೊಂಡ ಕಾರಣಕ್ಕೆ ದೂರ ಹೋಗಿದ್ದ ಮುಸ್ಲಿಮರನ್ನು ಒಲಿಸಿಕೊಂಡು ಅವರು ಮರಳಿ ಕರೆತಂದರು. ಮಾಯಾವತಿ ಅವರಿಂದ ಅವಗಣನೆಗೊಳಗಾಗಿರುವ ರೈತಸಮುದಾಯದ ನಿಜವಾದ ಹಿತರಕ್ಷಕ ಎಂದು ಬಿಂಬಿಸುವ ಮೂಲಕ ಅವರೂ ತಮ್ಮನ್ನು ಹಿಂಬಾಲಿಸುವಂತೆ ಮಾಡಿದರು.
ಅಪ್ಪನ ಪ್ರಯತ್ನಕ್ಕೆ ಜತೆ ನೀಡಿದ ಮಗ ಅಖಿಲೇಶ್ ಕುಖ್ಯಾತ ಕ್ರಿಮಿನಲ್‌ಗಳಿಗೆ ಟಿಕೆಟ್ ನಿರಾಕರಿಸುವ ಮೂಲಕ ತಮ್ಮ ಪಕ್ಷಕ್ಕಂಟಿದ್ದ `ಗೂಂಡಾಗಿರಿ~ಯ ಕಳಂಕವನ್ನು ತೊಡೆದುಹಾಕಿದರು.ಇಂಗ್ಲೀಷ್ ಶಿಕ್ಷಣ ಮತ್ತು ಕಂಪ್ಯೂಟರ್ ಬಗ್ಗೆ ಪಕ್ಷದ ಪುರಾತನ ಆಲೋಚನೆಯನ್ನು ಬದಲಾಯಿಸಿ ಪಕ್ಷಕ್ಕೆ ಆಧುನಿಕ ಕಾಲಕ್ಕೆ ಹೊಂದುವ ಚಹರೆ ನೀಡಿದರು. ಅಭಿವೃದ್ಧಿಯ ಅಜೆಂಡಾವನ್ನು ಚರ್ಚೆಗೊಡ್ಡುವ ಜತೆಯಲ್ಲಿ ಜಾತಿಯನ್ನು ಮೀರಿ ರಾಜಕೀಯ ಮಾಡುವ ಸಂದೇಶ ನೀಡಿ ಯುವ ಮತದಾರರನ್ನು ಆಕರ್ಷಿಸಿದರು. ಹೊಸಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜವಾದಿ ಪಕ್ಷವನ್ನು ಬೆಂಬಲಿಸುವಂತೆ ನೋಡಿಕೊಂಡರು.
 ಮಾಯಾವತಿ ಸೋಲು ಅವರಿಗೆ ಅನಿರೀಕ್ಷಿತವಾದರೂ ಅವರ ರಾಜಕೀಯ ಮತ್ತು ಆಡಳಿತವನ್ನು ಗಮನಿಸುತ್ತಾ ಬಂದವರಿಗೆ ನಿರೀಕ್ಷಿತವಾಗಿತ್ತು. ಆದರೆ ಉತ್ತರಪ್ರದೇಶದ ಮತದಾರರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ತಮ್ಮನ್ನು ಸೋಲಿಸುತ್ತಾರೆ ಎಂದು ಆಕೆ ನಿರೀಕ್ಷಿಸಿರಲಿಕ್ಕಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಹುಜನಸಮಾಜ ಪಕ್ಷ ಮೇಲ್ಜಾತಿ ವಿರುದ್ಧದ ತನ್ನ ನಿಲುವನ್ನು ಕೈಬಿಟ್ಟು ನಡೆಸಿದ ಬ್ರಾಹ್ಮಣಜೋಡೊ ಕಾರ್ಯಕ್ರಮದ ರಾಜಕೀಯ ಲಾಭ ಆ ಪಕ್ಷಕ್ಕೆ ಆಗಿತ್ತು. ಆದರೆ ಈ `ಅವಸರದ ಕ್ರಾಂತಿ~ 5 ವರ್ಷಗಳ ಅವಧಿಯಲ್ಲಿಯೇ ವಿಫಲಗೊಂಡಿದೆ. ದಲಿತರು ಮತ್ತು ಬ್ರಾಹ್ಮಣರ ನಡುವೆ ಘರ್ಷಣೆಗಳು ಪ್ರಾರಂಭವಾಗಿದ್ದವು.
ಇದರಿಂದಾಗಿ, ಬಿಎಸ್‌ಪಿ ತೆಕ್ಕೆಗೆ ಬಂದಿದ್ದ `ಅತಿಥಿ~ಗಳು ಹೊರಟು ಹೋದಂತಿದೆ. ಚುನಾವಣೆ ಸಮೀಪಿಸುತ್ತಿರುವಾಗಲೇ ಪಕ್ಷವನ್ನು ಶುಚಿಗೊಳಿಸಲು ಹೊರಟ ಮಾಯಾವತಿ ಅವರು 23 ಸಚಿವರನ್ನು ವಜಾಮಾಡಿದ್ದು ಮತ್ತು ಸುಮಾರು 100 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು ದೊಡ್ಡ ಮಟ್ಟದಲ್ಲಿ ರಾಜಕೀಯ ಹಾನಿ ಮಾಡಿದೆ. ಇದರಿಂದಾಗಿ ಭುಗಿಲೆದ್ದ ಭಿನ್ನಮತವನ್ನು ಎದುರಿಸುವ ಸಿದ್ಧತೆಯಾಗಲಿ, ಅದಕ್ಕೆ ಬೇಕಾದಷ್ಟು ಸಮಯವಾಗಲಿ ಅವರಲ್ಲಿ ಇರಲಿಲ್ಲ. 
ದಮನಕ್ಕೊಳಗಾದ ದಲಿತರಿಗೆ ರಕ್ಷಣೆ ಮತ್ತು ಆತ್ಮಗೌರವವನ್ನೇನೋ ಮಾಯಾವತಿ ತಂದುಕೊಟ್ಟರು. ಆದರೆ ಅದರ ನಂತರ ಏನು ಎಂಬ ಪ್ರಶ್ನೆಗೆ ಅವರಲ್ಲಿಯೂ ಉತ್ತರ ಇರಲಿಲ್ಲ. ಹದಿನಾರು ವರ್ಷಗಳ ಕಾಲ ಬಿಹಾರದಲ್ಲಿ ಲಾಲುಪ್ರಸಾದ್ ಅವರನ್ನು ಬೆಂಬಲಿಸಿದ ಅಲ್ಲಿನ ಮತದಾರರು ಕೊನೆಗೆ ಕೈಬಿಟ್ಟದ್ದು ಇದೇ ಕಾರಣಕ್ಕಾಗಿ. ಸಾಮಾಜಿಕ ಭದ್ರತೆ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ದಲಿತರಿಗೆ ನೀಡಿದ ಮಾಯಾವತಿ  ದಲಿತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಪ್ರಯತ್ನ ಮಾಡಲೇ ಇಲ್ಲ. ಇದರ ಬದಲಿಗೆ ಅಂಬೇಡ್ಕರ್ ಉದ್ಯಾನ ಮತ್ತು ಪ್ರತಿಮೆಗಳ ಸ್ಥಾಪನೆಗಾಗಿ ಖರ್ಚುಮಾಡಿದ ಸಾವಿರಾರು ಕೋಟಿ ರೂಪಾಯಿ ದಲಿತೇತರರಲ್ಲಿ ಮಾತ್ರವಲ್ಲ ದಲಿತರಲ್ಲಿಯೂ ಅಸಮಾಧಾನ ಮೂಡಿಸಿರಬಹುದು.
ಭಾರತೀಯ ಜನತಾ ಪಕ್ಷ ಫಲಿತಾಂಶದ ಚುನಾವಣೆಗೆ ಮೊದಲೇ ಸೋಲನ್ನು ಒಪ್ಪಿಕೊಂಡಿರುವ ಸ್ಥಿತಿಯಲ್ಲಿತ್ತು. ಕಳೆದೆರಡು ದಶಕಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಕೋಮುವಾದದ ಬಣ್ಣ ಬಳಿಯಲು ಹೋಗದೆ ಸಂಯಮ ತೋರಿ ಬಿಜೆಪಿಯನ್ನು ಬಲ್ಲವರೆಲ್ಲರನ್ನೂ ಅಚ್ಚರಿಗೀಡುಮಾಡಿತ್ತು. ಇದರಿಂದಾಗಿ ಸಾಮಾನ್ಯವಾಗಿ ಬಿಜೆಪಿ ಪ್ರಚಾರಕ್ಕೆ ಹಿಮ್ಮೇಳದಂತೆ ಜತೆ ನೀಡುತ್ತಾ ಬಂದಿದ್ದ ಸಾಧು-ಸಂತರೂ ದೂರ ಉಳಿದು ಬಿಟ್ಟರು. ಗೆಲ್ಲುವ ಯಾವ ಕಾರ್ಯತಂತ್ರವೂ ಆ ಪಕ್ಷದಲ್ಲಿರಲಿಲ್ಲ.
ಉತ್ತರಪ್ರದೇಶದ ತನ್ನ ಎರಡನೆ ಹುಟ್ಟೂರು ಎಂದೇ ಹೇಳುತ್ತಿದ್ದ ಅಟಲ ಬಿಹಾರಿ ವಾಜಪೇಯಿ ಹಾಸಿಗೆಯಿಂದ ಎದ್ದು ಬರುವ ಸ್ಥಿತಿಯಲ್ಲಿರಲಿಲ್ಲ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಬರುವುದು ಅವರ ಪಕ್ಷದ ಕೆಲವರಿಗೆ ಬೇಕಿರಲಿಲ್ಲ. ಲಾಲ್‌ಕೃಷ್ಣ ಅಡ್ವಾಣಿ ಎಲ್ಲರ ನಾಯಕರಾಗಿ ಉಳಿದಿಲ್ಲ. ನಾಯಕಿಯಾಗಿ ಪ್ರಚಾರದಲ್ಲಿ ತೊಡಗಿದರೂ ಉಮಾ ಭಾರತಿಯವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಔದಾರ್ಯವನ್ನು ಪಕ್ಷದ ನಾಯಕರು ತೋರಲಿಲ್ಲ. ಮಧ್ಯಪ್ರದೇಶವನ್ನು ಬಿಟ್ಟು ಬರುವ ಮನಸ್ಸು ಅವರಿಗೂ ಇರಲಿಲ್ಲ. ಆದುದರಿಂದ ಗಂಭೀರ ರಾಜಕಾರಣದಲ್ಲಿ ತೊಡಗಿರುವ ಪಕ್ಷ ತಮ್ಮದು ಎಂಬ ಅಭಿಪ್ರಾಯವನ್ನು ಜನರಲ್ಲಿ ಮೂಡಿಸಲು ಅದಕ್ಕೆ ಸಾಧ್ಯವಾಗಲಿಲ್ಲ. ಇದರಿಂದಾಗಿ ಅಧಿಕಾರದಲ್ಲಿ ಇಲ್ಲದೆ ಇದ್ದರೂ ಬಿಜೆಪಿಯ ಸದಸ್ಯ ಬಲ ಮತ್ತು ಮತಪ್ರಮಾಣ ಕಡಿಮೆಯಾಗಿದೆ.
ರಾಹುಲ್‌ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಮೂಲಕ ಬೆಂಬಲಿಗರ ನಿರೀಕ್ಷೆ ಗಗನಕ್ಕೇರುವಂತೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದಕ್ಕೆ ತಕ್ಕ ಸಾಧನೆಯನ್ನು ಮಾಡಿ ತೋರಿಸಲಾಗಲಿಲ್ಲ. ತನ್ನ ಸದಸ್ಯಬಲವನ್ನು ದುಪ್ಪಟ್ಟು ಮಾಡಿಕೊಳ್ಳುವ ಜತೆಯಲ್ಲಿ ಮತಪ್ರಮಾಣವನ್ನು ಹೆಚ್ಚಿಸಿಕೊಂಡರೂ ಉತ್ತರಪ್ರದೇಶದ ರಾಜಕೀಯವನ್ನು ಪ್ರತ್ಯಕ್ಷ ಇಲ್ಲವೇ ಪರೋಕ್ಷವಾಗಿ ನಿಯಂತ್ರಿಸುವಷ್ಟು ಶಕ್ತಿಯನ್ನು ಗಳಿಸಿಕೊಳ್ಳಲಿಕ್ಕೆ ಸಾಧ್ಯವಾಗಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಯಿಂದ ಪ್ರಾರಂಭವಾದ ಪಕ್ಷದ ಬಲವರ್ಧನೆಯ ಪ್ರಕ್ರಿಯೆ ಈ ಚುನಾವಣೆಯಲ್ಲಿಯೂ ಮುಂದುವರಿದಿದೆ. ಇದು ಮತಪ್ರಮಾಣದಲ್ಲಿನ ಹೆಚ್ಚಳದಲ್ಲಿ ವ್ಯಕ್ತವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 320 ಕ್ಷೇತ್ರಗಳಲ್ಲಿ ಠೇವಣಿಯನ್ನು ಕಳೆದುಕೊಂಡಿದ್ದ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ದೊಡ್ಡಪ್ರಮಾಣದ ಮತಗಳು ಬೇಕಿತ್ತು. ಆ ಪ್ರಮಾಣದಲ್ಲಿ ಮತ ಬಂದಿಲ್ಲ.
ಕಾಂಗ್ರೆಸ್ ಹಿನ್ನಡೆಗೆ 22 ವರ್ಷಗಳ ರಾಜಕೀಯ ವನವಾಸದಿಂದಾಗಿ ದುರ್ಬಲಗೊಂಡಿರುವ ಪಕ್ಷದ ಸಂಘಟನೆಯೂ ಕಾರಣ.  ಮುಲಾಯಂಸಿಂಗ್ ಯಾದವ್ ಮತ್ತು ಮಾಯಾವತಿ ಅವರಿಗೆ ಎದುರಾಗಿ ಬಲಿಷ್ಠವಾದ ಸ್ಥಳೀಯ ನಾಯಕತ್ವವನ್ನು ಬಿಂಬಿಸಲು ಸಾಧ್ಯವಾಗದೆ ಇರುವುದು ಕೂಡಾ ಕಾಂಗ್ರೆಸ್ ಪಕ್ಷದ ದೌರ್ಬಲ್ಯ.
ಮುಸ್ಲಿಮರನ್ನು ಓಲೈಸುವ ಉದ್ದೇಶದಿಂದ ಚುನಾವಣಾ ಪೂರ್ವದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಮಾಡಿದ ಘೋಷಣೆ ಮತ್ತು ಪ್ರಚಾರ ಕಾಲದಲ್ಲಿ ಅದನ್ನು ಬಳಸಿಕೊಂಡ ರೀತಿ ಕೂಡಾ ಆ ಪಕ್ಷಕ್ಕೆ ತಿರುಗುಬಾಣವಾಗಿ ಹೋಯಿತು. ಪ್ರಿಯಾಂಕಾಗಾಂಧಿ ಪ್ರಚಾರ ಮಾಧ್ಯಮದ ಗಮನ ಸೆಳೆದರೂ ಅಮೇಠಿ ಮತ್ತು ರಾಯಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿಯೂ ಪಕ್ಷಕ್ಕೆ ಗೆಲುವು ತಂದುಕೊಡಲಾಗಲಿಲ್ಲ.  2014ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿಯವರಿಗೆ ಫಲಿತಾಂಶ ಉತ್ತೇಜನ ನೀಡುವಂತಹದ್ದಲ್ಲ.
ಚುನಾವಣಾ ಫಲಿತಾಂಶದಲ್ಲಿಯೇ ರಾಜಕಾರಣದ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗುವುದಿಲ್ಲ. ಮುಲಾಯಂಸಿಂಗ್  ನಿಜಕ್ಕೂ ಬದಲಾಗಿದ್ದಾರೆಯೇ? ಚುನಾವಣೆಯಲ್ಲಿನ ಸೋಲು ಮಾಯಾವತಿಯವರಲ್ಲಿ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿದೆಯೇ? ಕೋಮುವಾದಿ ರಾಜಕೀಯದಿಂದ ಅಂತರ ಕಾಯ್ದುಕೊಳ್ಳುವ ಈಗಿನ ನಿರ್ಧಾರಕ್ಕೆ ಬಿಜೆಪಿ ಬದ್ಧವಾಗಿ ಉಳಿಯಲಿದೆಯೇ? ಆಕ್ರಮಣಕಾರಿ ರಾಜಕೀಯವನ್ನು ಪ್ರಾರಂಭಿಸಿರುವ ಕಾಂಗ್ರೆಸ್ ಪಕ್ಷ ರಚನಾತ್ಮಕ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸಲಿದೆಯೇ?- ಇವೆಲ್ಲವೂ ಮುಂದಿನ ದಿನಗಳಲ್ಲಿ ಕೇಳಿಬರಲಿರುವ ಹೊಸ ಪ್ರಶ್ನೆಗಳು.

Sunday, March 3, 2013

ಪ್ರಜಾಪ್ರಭುತ್ವವನ್ನು ಬಾಧಿಸುತ್ತಿರುವ ಪಕ್ಷಾಂತರದ ರೋಗ

ಪಕ್ಷಾಂತರಿಗಳಿಗೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ಹೇಳುತ್ತಿರುವ ಕಡು ಆಶಾವಾದಿಗಳು ಈಗಲೂ ನಮ್ಮಲ್ಲಿದ್ದಾರೆ. ಸಂವಿಧಾನದ ಕಾರ್ಯನಿರ್ವಹಣೆಯ ಪುನರ್‌ಪರಿಶೀಲನಾ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅವರೂ ಇದೇ ರೀತಿಯ ವಿಶ್ವಾಸ ಹೊಂದಿದ್ದವರು.
ಈ ಕಾರಣದಿಂದಲೇ ಅವರು `ಯಾವುದೇ ಜನಪ್ರತಿನಿಧಿ ವೈಯಕ್ತಿಕವಾಗಿ ಇಲ್ಲವೇ ಗುಂಪಾಗಿ, ಪಕ್ಷದಿಂದ ಇಲ್ಲವೆ ಮೈತ್ರಿಕೂಟದಿಂದ ಪಕ್ಷಾಂತರ ಹೊಂದಿದರೆ ಅಂತಹವರು ಜನಪ್ರತಿನಿಧಿ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಬೇಕು, ಪಕ್ಷ ವಿಭಜನೆಗೆ ಕೂಡಾ ಅವಕಾಶ ನೀಡಬಾರದು' ಎಂದು ಶಿಫಾರಸು ಮಾಡಿದ್ದರು.
ಈಗಿನ ಪಕ್ಷಾಂತರ ನಿಷೇಧ ಕಾಯ್ದೆಗೆ ಈ ಶಿಫಾರಸಿನ ಆಧಾರದಲ್ಲಿ  ತಿದ್ದುಪಡಿ ಮಾಡಿದರೆ ಪಕ್ಷಾಂತರ ಪಿಡುಗನ್ನು ನಿಯಂತ್ರಿಸಬಹುದೇನೋ ಎಂಬ ಚರ್ಚೆ ನಡೆಯುತ್ತಿದ್ದ ಕಾಲದಲ್ಲಿಯೇ ಕರ್ನಾಟಕದಲ್ಲಿ `ಆಪರೇಷನ್ ಕಮಲ' ನಡೆದು ಅಂತಹ ತಿದ್ದುಪಡಿ ಕೂಡಾ ವ್ಯರ್ಥ ಪ್ರಯತ್ನ ಎಂಬ ಸಂದೇಶ ನೀಡಿದೆ.
ಕರ್ನಾಟಕದಲ್ಲಿ ಪಕ್ಷಾಂತರ ಮಾಡಿದವರು ತಮ್ಮ ಸ್ಥಾನಕ್ಕೆರಾಜೀನಾಮೆ ನೀಡಿ ಹಿಂದಿನ ಕ್ಷೇತ್ರದಿಂದಲೇ ಮರುಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಸಂವಿಧಾನಕ್ಕೆ ಸವಾಲು ಹಾಕಿದ್ದರು.
ಪಕ್ಷಾಂತರ ಎಂಬ ರೋಗ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಈ ಬಗೆಯಲ್ಲಿ ದುರ್ಬಲಗೊಳಿಸಿ ನಗೆಪಾಟಲಿಗೀಡುಮಾಡಲಿದೆ ಎಂದು ಬಹುಶಃ ಸಂವಿಧಾನತಜ್ಞರು ಕೂಡಾ ನಿರೀಕ್ಷಿಸಿರಲಿಲ್ಲ. ಈ ಪಿಡುಗನ್ನು ನಿಯಂತ್ರಿಸುವ ಮೊದಲ ಪ್ರಯತ್ನ ನಡೆದದ್ದು 1968ರಲ್ಲಿ.
ಕಾಂಗ್ರೆಸ್ ಸದಸ್ಯ ಪಿ.ಎ.ವೆಂಕಟಸುಬ್ಬಯ್ಯ ಈ ಉದ್ದೇಶದ ಖಾಸಗಿ ಸದಸ್ಯರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದರು. ಅದರ ಪರಿಣಾಮವಾಗಿ ನೇಮಕಗೊಂಡದ್ದು ವೈ.ಬಿ.ಚವ್ಹಾಣ್ ನೇತೃತ್ವದ ಸಮಿತಿ. ಅದು ನೀಡಿದ ವರದಿ ಬಗ್ಗೆ ಚರ್ಚೆಯೇ ನಡೆಯಲಿಲ್ಲ.
1978ರಲ್ಲಿ ಆಗಿನ ಪ್ರಧಾನಿ ಮೊರಾರ್ಜಿ ದೇಸಾಯಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮಂಡಿಸಬಯಸಿದಾಗ ಆಡಳಿತ ಮತ್ತು ವಿರೋಧ ಪಕ್ಷಗಳೆರಡು ವಿರೋಧಿಸಿದ್ದವು. ಕೊನೆಗೆ ಮೊರಾರ್ಜಿ ದೇಸಾಯಿ ಸರ್ಕಾರ ಪಕ್ಷಾಂತರಕ್ಕೆ ಬಲಿಯಾಗಿದ್ದು ಇತಿಹಾಸ.
ಕೊನೆಗೂ ಇದರಲ್ಲಿ ಯಶಸ್ಸು ಕಂಡದ್ದು ರಾಜೀವ್‌ಗಾಂಧಿಯವರು. 1985ರಲ್ಲಿ ಪ್ರಧಾನಿ ರಾಜೀವ್‌ಗಾಂಧಿ ಪಕ್ಷಾಂತರವನ್ನು ನಿಷೇಧಿಸಲು ಸಂವಿಧಾನಕ್ಕೆ 52ನೇ ತಿದ್ದುಪಡಿ ಮಾಡಿ ಹತ್ತನೆ ಶೆಡ್ಯೂಲ್‌ನಲ್ಲಿ ಸೇರಿಸಲು ಹೊರಟಾಗ  ಅದನ್ನು ಹಿರಿಯ ಸಮಾಜವಾದಿ ಮಧು ಲಿಮಯೆ ಮತ್ತು ಸಂವಿಧಾನ ತಜ್ಞ ನಾನಿ ಪಾಲ್ಖಿವಾಲ ಬಲವಾಗಿ ವಿರೋಧಿಸಿದ್ದರು.
`ತಮ್ಮ ನಂಬಿಕೆಗೆ ಅನುಗುಣವಾಗಿ ಮತಚಲಾಯಿಸಲು ಸದಸ್ಯರಿಗೆ ಅವಕಾಶ ನಿರಾಕರಿಸಿದರೆ ಅವರನ್ನು ಆಯ್ಕೆ ಮಾಡಿದ ಮತದಾರರ ತೀರ್ಪನ್ನು ಪ್ರಶ್ನಿಸಿದಂತಾಗುತ್ತದೆ. ಸೈದ್ಧಾಂತಿಕ ನೆಲೆಯ ಪಕ್ಷ ವಿಭಜನೆಗೆ ಅವಕಾಶ ನೀಡಬೇಕು, ಇಲ್ಲವಾದರೆ ಪಕ್ಷದಲ್ಲಿ ಕೆಲವು ನಾಯಕರ ಒಡೆತನಕ್ಕೆ ಉಳಿದವರು ಬಯಲಾಗುತ್ತದೆ' ಎಂದು ಸಂಸತ್‌ನಲ್ಲಿ  ಅವರಿಬ್ಬರು ವಾದಿಸಿದ್ದರು.
ಪಕ್ಷಾಂತರ ನಿಷೇಧ ಎನ್ನುವುದು ಪಕ್ಷದೊಳಗಿನ ಆಂತರಿಕ ಪ್ರಜಾಪ್ರಭುತ್ವವನ್ನು ಮಾತ್ರವಲ್ಲ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾಶ ಮಾಡುತ್ತದೆ ಎಂದು ಆ ಮಹಾನುಭಾವರು ನಂಬಿದ್ದರು. ಈ ಕಾರಣಕ್ಕಾಗಿಯೇ ರಾಜೀವ್‌ಗಾಂಧಿಯವರು ಮೂಲಮಸೂದೆಯಲ್ಲಿ ಬದಲಾವಣೆ ಮಾಡಿ ಮೂರನೆ ಒಂದರಷ್ಟು ಸದಸ್ಯರ ಪಕ್ಷಾಂತರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.
ರಾಜೀವ್‌ಗಾಂಧಿ ಜಾರಿಗೆ ತಂದ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಕಾರ ಚುನಾಯಿತ ಸದಸ್ಯ ಸ್ವಇಚ್ಛೆಯಿಂದ ರಾಜಕೀಯ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೆ, ಪಕ್ಷ ಹೊರಡಿಸಿದ ವಿಪ್ ಉಲ್ಲಂಘಿಸಿ ಮತ ಚಲಾಯಿಸಿದರೆ ಇಲ್ಲವೆ ಪೂರ್ವಾನುಮತಿ ಪಡೆಯದೆ ಗೈರುಹಾಜರಾದರೆ ಅನರ್ಹರಾಗುತ್ತಾರೆ. ಆದರೆ ಒಂದು ಪಕ್ಷದ ಒಟ್ಟು ಸದಸ್ಯ ಬಲದ ಮೂರನೆ ಒಂದರಷ್ಟು ಸದಸ್ಯರು `ಪಕ್ಷಾಂತರ'ಗೊಂಡರೆ ಅದು `ವಿಲೀನ' ಆಗುತ್ತಿತ್ತು.
ಅಂತಹ ಪಕ್ಷಾಂತರಿಗಳನ್ನು ಅನರ್ಹಗೊಳಿಸುವಂತಿರಲಿಲ್ಲ. ಈ ಕಾರಣಕ್ಕಾಗಿಯೇ ಚುನಾವಣಾ ಸುಧಾರಣೆಯ ದಿನೇಶ್ ಗೋಸ್ವಾಮಿ ಸಮಿತಿ, ಕಾನೂನು ಆಯೋಗ ಮತ್ತು ರಾಷ್ಟ್ರೀಯ ಸಂವಿಧಾನ ಕಾರ್ಯನಿರ್ವಹಣಾ ಪುನರ್‌ಪರಿಶೀಲನಾ ಆಯೋಗ 52ನೇ ತಿದ್ದುಪಡಿಯನ್ನು ವಿರೋಧಿಸಿದ್ದವು.
`ವೈಯಕ್ತಿಕ ಪಕ್ಷಾಂತರಕ್ಕೆ ಕಡಿವಾಣ ಹಾಕಿ ಸಾಮೂಹಿಕ ಪಕ್ಷಾಂತರಕ್ಕೆ ಅವಕಾಶ ಮಾಡಿಕೊಟ್ಟಿದೆ' ಎನ್ನುವುದು ಈ ಕಾಯ್ದೆಯ ವಿರುದ್ಧದ ಮುಖ್ಯ ಆರೋಪವಾಗಿತ್ತು. 2003ರಲ್ಲಿ ಎನ್‌ಡಿಎ ಸರ್ಕಾರ ಸಂವಿಧಾನಕ್ಕೆ 91ನೇ ತಿದ್ದುಪಡಿ ಮಾಡುವ ಮೂಲಕ ಈ ಅಡ್ಡದಾರಿಯನ್ನು ಮುಚ್ಚುವ ಪ್ರಯತ್ನ ಮಾಡಿತು.
`ವಿಲೀನ'ಗೊಳ್ಳಬೇಕಾದರೆ ಮೂರನೆ ಒಂದರಷ್ಟಲ್ಲ, ಮೂರನೆ ಎರಡರಷ್ಟು ಸದಸ್ಯರು ಪಕ್ಷಾಂತರ ಮಾಡಿರಬೇಕು ಎಂದು ಈ ತಿದ್ದುಪಡಿ ಹೇಳಿದೆ. ಇದಾದ ನಂತರವೂ ಪಕ್ಷಾಂತರದ ರೋಗ ನಿಂತಿಲ್ಲ.
ಪಕ್ಷಾಂತರ ನಿಷೇಧ ಕಾಯ್ದೆಯ ಜಾರಿಯಲ್ಲಿ ಅತ್ಯಂತ ದುರ್ಬಲ ಕೊಂಡಿ ಸಭಾಧ್ಯಕ್ಷರದ್ದು. ಕಾಯ್ದೆ ಜಾರಿಗೆ ಬಂದ ನಂತರದ ಅವಧಿಯಲ್ಲಿ ನಡೆದ ಪಕ್ಷಾಂತರ ವಿವಾದಗಳನ್ನೆಲ್ಲ ನೋಡಿದರೆ ಅವುಗಳಲ್ಲಿ ಹೆಚ್ಚಿನ ಪ್ರಕರಣಗಳ ಕೇಂದ್ರ ಸ್ಥಾನದಲ್ಲಿ ಕಾಣುತ್ತಿರುವುದು ಸಭಾಧ್ಯಕ್ಷರು ಮತ್ತು ರಾಜ್ಯಪಾಲರು.
ಕರ್ನಾಟಕವೂ ಸೇರಿದಂತೆ ಮೇಘಾಲಯ,ಮಿಜೋರಾಂ,ನಾಗಲ್ಯಾಂಡ್,ಗೋವಾ, ತಮಿಳುನಾಡು, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ರಾಜ್ಯಗಳಲ್ಲಿನ ಪಕ್ಷಾಂತರ ಪ್ರಕರಣಗಳೇ ಇದಕ್ಕೆ ಸಾಕ್ಷಿ. ಮೂಲಕಾಯ್ದೆಯಲ್ಲಿ ಸಭಾಧ್ಯಕ್ಷರಿಗೆ ಪರಮಾಧಿಕಾರ ಇತ್ತು.
ಅವರು ಕೈಗೊಂಡ ನಿರ್ಧಾರವನ್ನು ನ್ಯಾಯಾಲಯ ಕೂಡಾ ಪ್ರಶ್ನಿಸುವಂತಿರಲಿಲ್ಲ. ಆದರೆ `ಸಭಾಧ್ಯಕ್ಷರ ತೀರ್ಮಾನ ನ್ಯಾಯಾಂಗದ ಪರಿಶೀಲನೆಗೆ ಒಳಪಡುತ್ತದೆ' ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಸಭಾಧ್ಯಕ್ಷರ ನಿರಂಕುಶ ಅಧಿಕಾರಕ್ಕೆ ಕಡಿವಾಣ ಬಿದ್ದರೂ ಅವರು ಅಡ್ಡಮಾರ್ಗ ಹಿಡಿಯುವುದನ್ನು ತಪ್ಪಿಸಲು ಆಗಿಲ್ಲ.
ಸಭಾಧ್ಯಕ್ಷರು ಮೂಲತಃ ರಾಜಕಾರಣಿಗಳೇ ಆಗಿರುವುದರಿಂದ ಅವರ ನಿರ್ಧಾರಗಳಲ್ಲಿ ರಾಜಕೀಯ ಒಲವು ನಿಲುವುಗಳ ಪ್ರಭಾವ ಸಹಜ. ಸಾಮಾನ್ಯವಾಗಿ ಆಡಳಿತ ಪಕ್ಷದ ಶಾಸಕರೇ ಸಭಾಧ್ಯಕ್ಷರಾಗಿ ಆಯ್ಕೆಯಾಗುವ ಕಾರಣ ಅವರು ತನ್ನ ಪಕ್ಷದ ಹಿತವನ್ನು ಮೀರಿ ಪಕ್ಷಾತೀತವಾಗಿ ನಡೆದುಕೊಳ್ಳುವಷ್ಟು ನ್ಯಾಯನಿಷ್ಠುರರಾಗಿರುವುದು ಸಾಧ್ಯವೂ ಇಲ್ಲವೇನೋ? ಸಭಾಧ್ಯಕ್ಷರ ಹುದ್ದೆಯ ದುರುಪಯೋಗಕ್ಕೆ ಇದಕ್ಕೆ 1993 ಮತ್ತು 1994ರಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ಎರಡು ತೀರ್ಪುಗಳಿಗೆ ಕಾರಣವಾದ ಗೋವಾ ರಾಜ್ಯದ ಪಕ್ಷಾಂತರ ಪ್ರಕರಣಕ್ಕಿಂತ ಒಳ್ಳೆಯ ಉದಾಹರಣೆ ಬೇರೆ ಇರಲಾರದು.
ಆ ಪ್ರಕರಣದಲ್ಲಿ ಸಭಾಧ್ಯಕ್ಷರೇ ಪಕ್ಷಾಂತರಿಗಳ ಜತೆ ಸೇರಿ ಮುಖ್ಯಮಂತ್ರಿಗಳಾಗಿಬಿಟ್ಟಿದ್ದರು. ಎಷ್ಟೊ ಸಂದರ್ಭಗಳಲ್ಲಿ ಸಭಾಧ್ಯಕ್ಷರಿಗೆ ಮುಖ್ಯವಾಗಿ ವಿಧಾನಸಭಾಧ್ಯಕ್ಷರಿಗೆ ಪಕ್ಷಾಂತರ ನಿಷೇಧದಂತಹ ಕಾನೂನಿಗೆ ಸಂಬಂಧಿಸಿದ ಸಂಕೀರ್ಣ ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳುವ ಅರ್ಹತೆ ಮತ್ತು ತರಬೇತಿ ಇರದೆ ಇರುವುದು ಕೂಡಾ ತಪ್ಪು ನಿರ್ಧಾರಕ್ಕೆ ಕಾರಣವಾಗಿದೆ.
ಈ ಕಾರಣಗಳಿಗಾಗಿಯೇ ಪಕ್ಷಾಂತರ ಮಾಡಿದ ಜನಪ್ರತಿನಿಧಿಗಳನ್ನು ಅನರ್ಹಗೊಳಿಸುವ ಅಧಿಕಾರವನ್ನು ಸಭಾಧ್ಯಕ್ಷರಿಗೆ ನೀಡದೆ ಅದನ್ನು ಚುನಾವಣಾ ಆಯೋಗಕ್ಕೆ ಬಿಡಬೇಕು ಎಂದು ರಾಷ್ಟ್ರೀಯ ಸಂವಿಧಾನ ಕಾರ್ಯನಿರ್ವಹಣಾ ಪುನರ್‌ಪರಿಶೀಲನಾ ಆಯೋಗ ಶಿಫಾರಸು ಮಾಡಿತ್ತು.
ಪಕ್ಷಾಂತರ ವಿವಾದವನ್ನು ಕೇಂದ್ರಮಟ್ಟದಲ್ಲಿ ರಾಷ್ಟ್ರಪತಿಗಳಿಗೆ ಮತ್ತು ರಾಜ್ಯಮಟ್ಟದಲ್ಲಿ ರಾಜ್ಯಪಾಲರ ವಿವೇಚನೆಗೆ ನೀಡಬೇಕೆಂಬ ಅಭಿಪ್ರಾಯ ಕೂಡಾ ಇದೆ. ಆದರೆ ಈ ಎರಡು ಸಾಂವಿಧಾನಿಕ ಹುದ್ದೆಗಳು ಕೂಡಾ ಆಡಳಿತ ಪಕ್ಷದ ರಬ್ಬರ್‌ಸ್ಟಾಂಪ್‌ಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪ ಇರುವ ಕಾರಣ ಈ ಅಭಿಪ್ರಾಯಕ್ಕೆ ಹೆಚ್ಚಿನ ಮಹತ್ವ ಸಿಕ್ಕಿಲ್ಲ.
ಇದ್ಯಾವುದೂ ಬೇಡ ಎಂದಾದರೆ ಪಕ್ಷಾಂತರ ವಿವಾದ ಇತ್ಯರ್ಥಕ್ಕೆ ಕೇಂದ್ರದಲ್ಲಿ ಸುಪ್ರೀಂಕೋರ್ಟ್ ಮತ್ತು ರಾಜ್ಯಗಳಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳನ್ನೊಳಗೊಂಡ ಸ್ವತಂತ್ರ ಸಮಿತಿಯನ್ನು ರಚಿಸಬೇಕೆಂಬ ಸಲಹೆ ಕೂಡಾ ಇದೆ.
ಆದರೆ ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದಾಗ ಎನ್‌ಡಿಎ ಸರ್ಕಾರ ಇವುಗಳಲ್ಲಿ ಯಾವ ಶಿಫಾರಸು,ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ.
ಪಕ್ಷ ವಿರೋಧಿ ಚಟುವಟಿಕೆಯ ವ್ಯಾಖ್ಯಾನ, ಪಕ್ಷಾಂತರ ನಿಷೇಧ ಕಾಯ್ದೆಯ ಇನ್ನೊಂದು ಮುಖ್ಯ ದೋಷ. ಈಗಿನ ಕಾಯ್ದೆಯ ಪ್ರಕಾರ ಪಕ್ಷದ ವಿಪ್ ಉಲ್ಲಂಘಿಸಿ ಮತದಾನ ನಡೆಸಿದ ನಂತರವಷ್ಟೇ  ಕ್ರಮ ಕೈಗೊಳ್ಳಲು ಅವಕಾಶ ಇರುವುದು. ವಿಪ್ ಉಲ್ಲಂಘನೆಗಾಗಿ ಪಕ್ಷಾಂತರಿ ಸದಸ್ಯರ ಸದಸ್ಯತ್ವ ರದ್ದಾದರೂ ಅವರು ಚಲಾಯಿಸಿದ ಮತಗಳು ಕ್ರಮಬದ್ಧವಾಗಿರುತ್ತದೆ.
ಆ ಮತಗಳಿಂದಲೇ ಒಂದು ಸರ್ಕಾರ ಉಳಿಯಬಹುದು ಇಲ್ಲವೆ ಪತನಗೊಳ್ಳಬಹುದು. ಇದರಿಂದ ಪಕ್ಷಾಂತರಿ ತನ್ನ ಉದ್ದೇಶದಲ್ಲಿ ಯಶಸ್ಸು ಕಂಡಂತಾಗುತ್ತದೆ.
ಇದಲ್ಲದೆ ತಮ್ಮ ಪಕ್ಷದ ನೀತಿಯನ್ನು ವಿರೋಧಿಸುವುದು, ತಮ್ಮ ಪಕ್ಷದ ನಾಯಕರನ್ನು ಟೀಕಿಸುವುದು ಮತ್ತು ವಿರೋಧಪಕ್ಷಗಳ ನಾಯಕರ ಜತೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಎಂಬುದು ನಿಜವಾದರೂ ಕಾನೂನಿನ ಪ್ರಕಾರ ಪಕ್ಷಾಂತರ ಅಲ್ಲ.
ಈ ರಕ್ಷಣೆಯನ್ನು ಬಳಸಿಕೊಂಡೇ ಬಿಜೆಪಿ ಬಂಡುಕೋರರು  ತಮ್ಮ ಸ್ಥಾನ ಉಳಿಸಿಕೊಂಡದ್ದಲ್ಲವೇ?ಪಕ್ಷಾಂತರದ ಪಿಡುಗನ್ನು ನಿಯಂತ್ರಿಸಲು ಕೇವಲ ಪಕ್ಷಾಂತರ ನಿಷೇಧ ಕಾಯ್ದೆಯೊಂದರಿಂದಲೇ ಸಾಧ್ಯವಾಗಲಾರದೆಂಬುದು ಇತ್ತೀಚಿನ ಹಲವಾರು ಪ್ರಕರಣಗಳಿಂದ ಸಾಬೀತಾಗಿದೆ.
ಅಭ್ಯರ್ಥಿಗಳ ಆಯ್ಕೆ ಮಟ್ಟದಲ್ಲಿಯೇ ಜರಡಿ ಹಿಡಿದು ಕಳಂಕಿತರನ್ನು ನಿವಾರಿಸಿಕೊಳ್ಳದಿದ್ದರೆ ಈ ಪಿಡುಗಿನ ನಿವಾರಣೆ ಅಸಾಧ್ಯ. ಇದಕ್ಕಾಗಿ ನ್ಯಾಯಾಲಯ ಮತ್ತು ಚುನಾವಣಾ ಆಯೋಗ ಪ್ರಯತ್ನ ಮಾಡಿದಾಗಲೆಲ್ಲ ಪಕ್ಷಭೇದ ಇಲ್ಲದೆ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಾ ಬಂದಿದ್ದಾರೆ.
ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗ ತಾವು ಹೊಂದಿರುವ ಆಸ್ತಿ, ಅಪರಾಧದ ಹಿನ್ನೆಲೆ, ಬಾಕಿ ಇರಿಸಿಕೊಂಡಿರುವ ತೆರಿಗೆ ಮತ್ತು ಸಾಲ ಹಾಗೂ ಶೈಕ್ಷಣಿಕ ಅರ್ಹತೆಗಳನ್ನು ಕಡ್ಡಾಯವಾಗಿ ಪ್ರಮಾಣಪತ್ರಗಳ ಮೂಲಕ ಸಲ್ಲಿಸಬೇಕೆಂಬ ಸುಪ್ರೀಂಕೋರ್ಟ್ ನಿರ್ದೇಶನ ಜಾರಿಗೆ ಬರದಂತೆ ತಡೆಯಲು ಆಗಿನ ಎನ್‌ಡಿಎ ಸರ್ಕಾರ ಏನೆಲ್ಲ ಸರ್ಕಸ್ ನಡೆಸಿದೆ ಎನ್ನುವುದನ್ನು ದೇಶದ ಜನತೆ ಗಮನಿಸಿದೆ. ಕೊನೆಗೂ ಛಲಬಿಡದ ಸುಪ್ರೀಂಕೋರ್ಟ್‌ನ ಪ್ರಯತ್ನದಿಂದಾಗಿಯೇ ಅದು ಜಾರಿಗೆ ಬಂದಿದ್ದು.
ಪಕ್ಷಾಂತರಿಗಳ ಜಾತಕವನ್ನು ಪರಿಶೀಲಿಸಿದರೆ ಇವರಲ್ಲಿ ಹೆಚ್ಚಿನವರು ಭ್ರಷ್ಟರು, ಕ್ರಿಮಿನಲ್ ಹಿನ್ನೆಲೆ ಹೊಂದಿದವರು ಮತ್ತು ಜನಪೀಡಕರು ಆಗಿರುವುದು ಕಂಡುಬರುತ್ತದೆ. ಇಂತಹವರು ಚುನಾವಣಾ ಕಣಕ್ಕೆ ಇಳಿಯಲು ಸಾಧ್ಯವಾಗದಂತೆ ಮೂಲದಲ್ಲಿಯೇ ತಡೆಯಲು ಸಾಧ್ಯವಾದರೆ ಮಾತ್ರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅದರ ಮೂಲ ಆಶಯಕ್ಕೆ ಭಂಗ ಉಂಟಾಗದಂತೆ ಉಳಿಸಿಕೊಂಡು ಹೋಗಲು ಸಾಧ್ಯ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಸುಧಾರಣೆಗಳ ಪ್ರಸ್ತಾವ ಸಲ್ಲಿಸಿರುವುದು.
ಐದುವರ್ಷಗಳಿಗಿಂತ ಹೆಚ್ಚು ಅವಧಿಯ ಜೈಲು ವಾಸದ ಶಿಕ್ಷೆಗೆ ಅರ್ಹವಾದ ಅಪರಾಧಗಳ ಆರೋಪ ಹೊತ್ತವರನ್ನು ಚುನಾವಣೆಯಲ್ಲಿ ಸ್ಪರ್ಧೆಗೆ ಅನರ್ಹರೆಂದು ಘೋಷಿಸಬೇಕು, ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಅಭ್ಯರ್ಥಿಗಳಿಗೆ ವಿಧಿಸಲಾಗುತ್ತಿರುವ ಆರು ತಿಂಗಳ ಶಿಕ್ಷೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸಬೇಕು ಮತ್ತು ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಬೇಕು.
ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು, ತಟಸ್ಥ ಇಲ್ಲವೆ ನೆಗೆಟಿವ್ ಮತದಾನಕ್ಕೆ ಅವಕಾಶ ನೀಡಬೇಕು, ಪಕ್ಷಾಂತರಿ ಸದಸ್ಯರನ್ನು ಅನರ್ಹಗೊಳಿಸಲು ರಾಷ್ಟ್ರಪತಿ ಇಲ್ಲವೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಅಧಿಕಾರವನ್ನು ಚುನಾವಣಾ  ಆಯೋಗಕ್ಕೆನೀಡಬೇಕು ..ಇತ್ಯಾದಿ ಪ್ರಸ್ತಾವಗಳು ಕಳೆದ ಹತ್ತುವರ್ಷಗಳಿಂದ ನೆನೆಗುದಿಗೆ ಬಿದ್ದಿವೆ.
ಆದರೆ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವ ಮತ್ತು ತಿದ್ದುಪಡಿಯ ಮೂಲಕ ಅದನ್ನು ಇನ್ನಷ್ಟು ಬಲಗೊಳಿಸಿದ  ಕಾಂಗ್ರೆಸ್ ಮತ್ತು ಬಿಜೆಪಿ ಎಂಬ ಎರಡು ರಾಷ್ಟ್ರೀಯ ಪಕ್ಷಗಳೇ ನಿರ್ಲಜ್ಚತೆಯಿಂದ ಪಕ್ಷಾಂತರವನ್ನು ಪ್ರೋತ್ಸಾಹಿಸುತ್ತಿರುವಾಗ ಚುನಾವಣಾ ಆಯೋಗದ ಪ್ರಸ್ತಾವಗಳನ್ನು ಜಾರಿಗೆ ತರುವವರು ಯಾರು?

Sunday, February 24, 2013

ಬೇಹುಗಾರಿಕೆಯ ಕಣ್ಣು ಕುರುಡಾಗಿದ್ದು ಹೇಗೆ?

ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ನಡೆದ ಅವಳಿ ಬಾಂಬು ಸ್ಫೋಟದ ನಂತರ ಕೇಂದ್ರ ಗೃಹಸಚಿವರು `ನಮಗೆ ಮಾಹಿತಿ ಇತ್ತು' ಎಂದು ಹೇಳಿರುವುದರಲ್ಲಿ ಹೊಸತೇನಿಲ್ಲ. ಹಿಂದಿನ ಬಹಳಷ್ಟು ಭಯೋತ್ಪಾದಕ ಕೃತ್ಯಗಳ ಸಂದರ್ಭದಲ್ಲಿಯೂ ಕೇಂದ್ರದ ಬೇಹುಗಾರಿಕಾ ಸಂಸ್ಥೆಗಳು `ನಮಗೆ ಮೊದಲೇ ಗೊತ್ತಿತ್ತು, ರಾಜ್ಯಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದೆವು' ಎಂದು ಹೇಳಿದ್ದವು.
ಹಿಂದೆಲ್ಲ ಈ  ಸುದ್ದಿಯನ್ನು ಬೇಹುಗಾರಿಕಾ ಸಂಸ್ಥೆಗಳು ನೇರವಾಗಿ ತಿಳಿಸದೆ ಮಾಧ್ಯಮಗಳಿಗೆ ಸೋರಿಬಿಡುತ್ತಿದ್ದವು. ಈ ಬಾರಿ ಗೃಹಸಚಿವ ಸುಶೀಲ್‌ಕುಮಾರ್ ಶಿಂಧೆ ಹುಂಬತನದಿಂದ ಇದನ್ನು ಬಾಯಿಬಿಟ್ಟು ಪತ್ರಕರ್ತರ ಮುಂದೆ ಹೇಳಿ ಮತ್ತೊಮ್ಮೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿದ್ದಾರೆ.
ಗೃಹಸಚಿವರು ಹೇಳಿರುವ ಎರಡು ಸಾಲುಗಳ ಹೇಳಿಕೆಯನ್ನೇ  ಹಿಡಿದುಕೊಂಡು ಆಗಲೇ ಪತ್ರಕರ್ತರು ಮತ್ತು ರಾಜಕೀಯ ನಾಯಕರು ಕೂಡಿ ಆಂಧ್ರಪ್ರದೇಶದ ಪೊಲೀಸರನ್ನು ಅಪರಾಧಿಗಳ ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ಪ್ರಾರಂಭಿಸಿದ್ದಾರೆ. ಪೊಲೀಸರು ತಮ್ಮ ಸಾಮರ್ಥ್ಯ ಪ್ರದರ್ಶನಕ್ಕಾಗಿ ಬಾಂಬುಸ್ಫೋಟದ ರಹಸ್ಯವನ್ನು ಭೇದಿಸಿಯೇಬಿಟ್ಟೆವು ಎನ್ನುವ ರೀತಿಯಲ್ಲಿ ಅರೆಬೆಂದ ತನಿಖಾ ವರದಿಗಳನ್ನು ಮಾಧ್ಯಮಗಳಿಗೆ ಸೋರಿಬಿಡುತ್ತಿದ್ದಾರೆ.
ಪೊಲೀಸರು ನೀಡುವ ಇಂತಹ `ಸುದ್ದಿ'ಗಳು ಎಷ್ಟೊಂದು ಅತಿರಂಜಿತ ಮತ್ತು ಸುಳ್ಳು ಎನ್ನುವುದು ಬೆಂಗಳೂರಿನ ವಿಶೇಷ ನ್ಯಾಯಾಲಯ ಶನಿವಾರವಷ್ಟೆ ದೋಷಮುಕ್ತಗೊಳಿಸಿದ ಪತ್ರಕರ್ತ ಮತಿಉರ್ ರೆಹಮಾನ್ ಸಿದ್ದಿಕಿ ಪ್ರಕರಣದಲ್ಲಿ ಮಾತ್ರವಲ್ಲ, ಇದೇ ಹೈದರಾಬಾದ್‌ನಲ್ಲಿ ನಡೆದ ಮೆಕ್ಕಾಮಸೀದಿ ಬಾಂಬುಸ್ಫೋಟದ ಘಟನೆಯಲ್ಲಿಯೂ ಸಾಬೀತಾಗಿದೆ. ಇದಕ್ಕೆ ಕೇವಲ ಪೊಲೀಸರನ್ನು ದೂರಲಾಗದು. ಕೇಂದ್ರ ಬೇಹುಗಾರಿಕಾ ಸಂಸ್ಥೆಗಳ ಕಿತಾಪತಿಯಿಂದಾಗಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗುವ ಪೊಲೀಸರು ಆತ್ಮರಕ್ಷಣೆಗಾಗಿ ಇದನ್ನು ಮಾಡುತ್ತಿರುತ್ತಾರೆ.
ಲೋಪ ಕೇವಲ ಆಂಧ್ರಪ್ರದೇಶ ಪೊಲೀಸರದ್ದೇ? ಕೈಗೆ ಹತ್ತಿದ ಮಾಹಿತಿಯನ್ನು ರಾಜ್ಯಗಳಿಗೆ ರವಾನಿಸಿ ಬಿಟ್ಟರೆ ಕೇಂದ್ರದ ಬೇಹುಗಾರಿಕಾ ಸಂಸ್ಥೆಗಳ ಕೆಲಸ ಮುಗಿಯಿತೇ? ಈ ಪ್ರಶ್ನೆಗಳ ಬಗ್ಗೆ ಚರ್ಚೆ ನಡೆಯದಿರಲು ಜನರಲ್ಲಿ ತಾಳ್ಮೆ ಇಲ್ಲದಿರುವುದು ಮಾತ್ರ ಅಲ್ಲ, ಬೇಹುಗಾರಿಕೆ ಎಂಬ ಮಾಯಾಲೋಕದ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದಿರುವುದೂ ಕಾರಣ.
ನಮ್ಮಲ್ಲಿ ಬಹುಹಂತಗಳ ಬೇಹುಗಾರಿಕಾ ವ್ಯವಸ್ಥೆ ಇದೆ. ಇಂಟಲಿಜೆನ್ಸ್ ಬ್ಯೂರೋ (ಐಬಿ), ರಿಸರ್ಚ್ ಎಂಡ್ ಅನಾಲಿಸಿಸ್ ವಿಂಗ್ (ರಾ),ರಾಜ್ಯ ಗುಪ್ತಚರ ಇಲಾಖೆ (ಸ್ಪೆಷಲ್ ಬ್ರಾಂಚ್) ಸೇನಾ ಗುಪ್ತಚರ ಇಲಾಖೆ, ಸಿಬಿಐ ಮತ್ತು  ಕೇಂದ್ರ ಆರ್ಥಿಕ ಗುಪ್ತಚರ ಇಲಾಖೆಗಳನ್ನೊಳಗೊಂಡ ಜಾಲವೇ ದೇಶದ ಬೇಹುಗಾರಿಕೆಯ ಕೇಂದ್ರ ವ್ಯವಸ್ಥೆ. ಇವೆಲ್ಲವೂ ರಾಷ್ಟ್ರೀಯ ಭದ್ರತಾ ಸಲಹೆಗಾರರು ಅಧ್ಯಕ್ಷರಾಗಿರುವ `ಜಂಟಿ ಗುಪ್ತಚರ ಸಮಿತಿ' (ಜೆಐಸಿ)ಗೆ ವರದಿ ಮಾಡುತ್ತವೆ. ಈ ಸಮಿತಿಯಲ್ಲಿ `ರಾ' ಮತ್ತು `ಐಬಿ'ಯ ಮುಖ್ಯಸ್ಥರು ಕೂಡಾ ಸದಸ್ಯರು.
ಬೇರೆ ದೇಶಗಳ ಚಟುವಟಿಕೆಗಳು ಮತ್ತು ವಿದೇಶದಲ್ಲಿ ನೆಲೆ ಊರಿರುವ ಭಯೋತ್ಪಾದಕ ತಂಡಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು `ರಾ' ಹೊಣೆ. ಆಂತರಿಕ ಭದ್ರತೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿರುವ `ಐಬಿ'ಗೆ ಸೇರಿದ್ದು. ಭೂಸೇನೆ, ವಾಯುಸೇನೆ ಮತ್ತು ನೌಕಾದಳ, ಬಿಎಸ್‌ಎಫ್, ಸಿಆರ್‌ಪಿಎಫ್, ಸಿಐಎಸ್‌ಎಫ್, ಎಸ್‌ಪಿಜಿ ಇವೆಲ್ಲವೂ ಸಂಗ್ರಹಿಸಿ ನೀಡುವ ಮಾಹಿತಿಯನ್ನು ರಕ್ಷಣೆ ಮತ್ತು ಅರೆಸೇನಾ ಗುಪ್ತಚರ ಇಲಾಖೆ ಜೆಐಸಿಗೆ ಸಲ್ಲಿಸುತ್ತದೆ.
ಆರ್ಥಿಕ ಗುಪ್ತಚರ ಇಲಾಖೆ ಮಾತ್ರವಲ್ಲ ಡಿಆರ್‌ಐ, ಇಡಿ, ವರಮಾನ ತೆರಿಗೆ ಇಲಾಖೆಗಳು ಕೂಡಾ ಮಾಹಿತಿಯನ್ನು ಜೆಐಸಿಗೆ ರವಾನಿಸುತ್ತದೆ. ಇದರ ಆಧಾರದಲ್ಲಿಯೇ ಪ್ರಧಾನಿ ಅಧ್ಯಕ್ಷತೆಯ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಸೇರಿ ಆಂತರಿಕ ಭದ್ರತೆ ಮತ್ತು ಬಾಹ್ಯಬೆದರಿಕೆಗೆ ಸಂಬಂಧಿಸಿದ ನೀತಿ-ನಿರ್ಧಾರಗಳನ್ನು ರೂಪಿಸುತ್ತದೆ. ಹೀಗಿದ್ದರೂ ಮತ್ತೆಮತ್ತೆ ನಮ್ಮ ಬೇಹುಗಾರಿಕೆ ವ್ಯವಸ್ಥೆ ವಿಫಲಗೊಳ್ಳುತ್ತಿರುವುದೇಕೆ?
ಯಾಕೆಂದರೆ ಕಾಗದದ ಮೇಲೆ ಅಚ್ಚುಕಟ್ಟಾಗಿ ಕಾಣುವ ಈ ವ್ಯವಸ್ಥೆಯ ಮೈತುಂಬಾ ತೂತುಗಳಿವೆ. ಮಾಹಿತಿಗಳ ಸಂಗ್ರಹ, ಸಂಕಲನ, ವಿಶ್ಲೇಷಣೆ ಮತ್ತು ತೀರ್ಮಾನ- ಇದು ಬೇಹುಗಾರಿಕೆ ಸಂಸ್ಥೆಗಳ ಕಾರ್ಯನಿರ್ವಹಣೆಯ ಪ್ರಾಥಮಿಕವಾದ ನಾಲ್ಕು ಹಂತಗಳು. ಈ ಕಾರ್ಯ ನಡೆಸಲು ಬೇಕಾದ ಸಿಬ್ಬಂದಿ, ಸಂಪನ್ಮೂಲ ಮತ್ತು ಸ್ವಾತಂತ್ರ್ಯವನ್ನು ಇವುಗಳಿಗೆ ನೀಡಲಾಗಿದೆ.  ಹೀಗಿದ್ದರೂ ವಿಫಲಗೊಳ್ಳಲು  ಮುಖ್ಯವಾಗಿ ಮೂರು ಕಾರಣಗಳು. ಮೊದಲನೆಯದು ರಾಜಕೀಯ ಮಧ್ಯಪ್ರವೇಶ, ಎರಡನೆಯದು ರಾಜಕೀಯವಾಗಿ ದುರ್ಬಳಕೆ, ಮೂರನೆಯದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸೌಹಾರ್ದದ ಕೊರತೆ.
ಬೇಹುಗಾರಿಕಾ ಸಂಸ್ಥೆಗಳ ರಾಜಕೀಯ ದುರ್ಬಳಕೆ ಹೇಗೆ ನಡೆಯುತ್ತದೆ ಎನ್ನುವುದನ್ನು `ಐಬಿ'ಯ ನಿವೃತ್ತ ಜಂಟಿ ನಿರ್ದೇಶಕ ಎಂ.ಕೆ.ಧರ್ ಅವರು ಬರೆದಿರುವ ವಿವಾದಾತ್ಮಕ ಪುಸ್ತಕ `ಓಪನ್ ಸೀಕ್ರೆಟ್'ನಲ್ಲಿ ಬಿಚ್ಚಿಟ್ಟಿದ್ದಾರೆ. `ಐಬಿ ಅಧಿಕಾರಿಗಳು ಪ್ರಧಾನಮಂತ್ರಿಗಳ ದಲ್ಲಾಳಿಗಳಂತೆ ವರ್ತಿಸುತ್ತಾರೆ.
ಪ್ರಧಾನಮಂತ್ರಿಗಳ ಮೌಖಿಕ ಆದೇಶದಂತೆ ಐಬಿ ಅಧಿಕಾರಿಗಳು ಸಂಸತ್ ಮತ್ತು ರಾಷ್ಟ್ರಪತಿ ಭವನದ ಮಾತ್ರವಲ್ಲ ತನ್ನ ಸಹದ್ಯೋಗಿಗಳ ದೂರವಾಣಿಗಳನ್ನು ಕದ್ದಾಲಿಸಿದ ಉದಾಹರಣೆಗಳಿವೆ' ಎಂದು ಧರ್ ಬರೆದಿದ್ದಾರೆ. ಕೇಂದ್ರದಲ್ಲಿ `ಐಬಿ' ಇಲ್ಲವೆ ರಾಜ್ಯದಲ್ಲಿರುವ `ಸ್ಪೆಷಲ್ ಬ್ರಾಂಚ್ (ಎಸ್‌ಬಿ)' ಅತಿಹೆಚ್ಚು ಬಳಕೆಯಾಗುವುದು ಆಡಳಿತಾರೂಢ ಪಕ್ಷ ವಿರೋಧ ಪಕ್ಷಗಳ ನಾಯಕರ ಬಗ್ಗೆ ಮಾಹಿತಿ ಕಲೆಹಾಕಲು ಮತ್ತು ಚುನಾವಣಾ ಪೂರ್ವದಲ್ಲಿ ಜನಾಭಿಪ್ರಾಯ ತಿಳಿದುಕೊಳ್ಳಲು. `ತಾಂತ್ರಿಕವಾಗಿ ಕೇಂದ್ರದ `ಐಬಿ' ನಿರ್ದೇಶಕ ಗೃಹಸಚಿವರಿಗೆ ವರದಿ ನೀಡಬೇಕಾಗಿದ್ದರೂ ಸಾಮಾನ್ಯವಾಗಿ ಅವರ ಸಂಪರ್ಕ ಪ್ರಧಾನಿ ಜತೆಯಲ್ಲಿಯೇ ಇರುತ್ತದೆ.
ನಿತ್ಯ ಪ್ರಧಾನಿಯವರನ್ನು ಭೇಟಿ ಮಾಡುವುದರಿಂದ ಬೆಳೆಸಿಕೊಂಡ ಸಲಿಗೆಯಿಂದಾಗಿ ಮಾತುಕತೆ ಭದ್ರತಾ ವಿಚಾರಗಳಿಗಿಂತ ಹೆಚ್ಚಾಗಿ ರಾಜಕೀಯ ಗಾಸಿಪ್‌ಗಳ ಸುತ್ತಲೇ ಸುತ್ತುತ್ತಿರುತ್ತವೆ' ಎಂದು ಇಂತಹ ಹಲವಾರು ಕೊಳಕು ಕೃತ್ಯಗಳಲ್ಲಿ ಖುದ್ದಾಗಿ ಭಾಗಿಯಾಗಿರುವ ಧರ್ ಬರೆದಿದ್ದಾರೆ. ಪ್ರಣವ್ ಮುಖರ್ಜಿ ಹಣಕಾಸು ಸಚಿವರಾಗಿದ್ದಾಗ ಅವರ ಕಚೇರಿಯನ್ನೇ ಬಗ್ ಮಾಡಿದ್ದು ಮತ್ತು ಇತ್ತೀಚೆಗೆ ವಿರೋಧಪಕ್ಷದ ನಾಯಕ ಅರುಣ್ ಜೇಟ್ಲಿ ಅವರ ದೂರವಾಣಿ ಕರೆಗಳ ಮಾಹಿತಿ ಸಂಗ್ರಹ ಪ್ರಕರಣಗಳನ್ನು ಗಮನಿಸಿದರೆ ಪರಿಸ್ಥಿತಿ ಈಗಲೂ ಬದಲಾಗಿಲ್ಲ ಎಂದು ಸ್ಪಷ್ಟವಾಗುತ್ತದೆ.
ಬೇಹುಗಾರಿಕೆಗಾಗಿ ಹತ್ತಾರು ಸಂಸ್ಥೆಗಳಿದ್ದರೂ ಆಂತರಿಕ ಭದ್ರತೆಯ ವಿಚಾರದಲ್ಲಿ `ಐಬಿ' ಪಾತ್ರವೇ ನಿರ್ಣಾಯಕ. ದೇಶದಾದ್ಯಂತ ಹತ್ತು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಅಧಿಕೃತ ಮಾಹಿತಿದಾರರನ್ನು ಇದು ಹೊಂದಿದೆ. ಇದರಲ್ಲಿ ಬೀದಿ ಬದಿಯ ಕ್ಷೌರಿಕನಿಂದ ಹಿಡಿದು, ಭೂಗತ ದೊರೆಗಳು, ಕ್ರಿಮಿನಲ್‌ಗಳು, ಡಬಲ್ ಏಜೆಂಟ್‌ಗಳೆಲ್ಲ ಇದ್ದಾರೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲಿ ಇದರ ಏಜೆಂಟ್‌ಗಳಿದ್ದಾರೆ. ಆದರೆ ಅಂತಿಮವಾಗಿ ಇದರ ಅವಲಂಬನೆ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವ ಸ್ಪೆಷಲ್ ಬ್ರಾಂಚ್ ಮೇಲೆ. ಆದರೆ `ರಾ'ದಂತೆ `ಎಸ್‌ಬಿ'ಯಲ್ಲಿಯೂ ಬಹುತೇಕ ಸಿಬ್ಬಂದಿ ಒಲ್ಲದ ಮನಸ್ಸಿನಿಂದಲೇ ಸೇರಿಕೊಂಡವರು.
ಮರುಭೂಮಿಯಂತಿರುವ `ರಾ', `ಎಸ್‌ಬಿ'ಗಳಿಗಿಂತ  ಸಂಬಳದ ಜತೆಯಲ್ಲಿ `ಹೆಚ್ಚುವರಿ ಆದಾಯ'ಕ್ಕೆ ಅವಕಾಶ ಇರುವ ಪೊಲೀಸ್ ಇಲಾಖೆಯೇ ವಾಸಿ ಎನ್ನುವವರೇ ಹೆಚ್ಚು. `ಬೇಹುಗಾರಿಕೆಯ ಮುಖ್ಯ ಕೊಂಡಿ ಬೀಟ್ ಪೊಲೀಸರು.ಆಂತರಿಕ ಭದ್ರತೆಯ ಕೆಲಸ ಒಬ್ಬ ಬೀಟ್ ಪೊಲೀಸ್ ಕಾನ್‌ಸ್ಬೇಬಲ್‌ನಿಂದ ಪ್ರಾರಂಭವಾಗುತ್ತದೆ. ಆ ಬೀಟ್ ವ್ಯವಸ್ಥೆ ಎಲ್ಲಿ ಸರಿ ಇದೆ ?'  ಎಂದು  26/11 ಘಟನೆಯ ನಂತರ ಕೇಂದ್ರ ಸರ್ಕಾರ ತನಿಖೆಗಾಗಿ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾದ ರಾಮ್‌ಪ್ರಧಾನ್ ಇತ್ತೀಚೆಗೆ ಪ್ರಶ್ನಿಸಿದ್ದರು.
ಪೊಲೀಸರ ನೇಮಕಾತಿಯಿಂದ ವರ್ಗಾವಣೆ ವರೆಗೆ ಎಲ್ಲ ಅಧಿಕಾರಗಳನ್ನು ರಾಜಕಾರಣಿಗಳು ಮುಷ್ಟಿಯಲ್ಲಿಟ್ಟುಕೊಂಡಿದ್ದಾರೆ. ಪೊಲೀಸ್ ವ್ಯವಸ್ಥೆಯ ಸುಧಾರಣೆಗಾಗಿ ಧರ್ಮವೀರ ಆಯೋಗದಿಂದ ಹಿಡಿದು ಸೋಲಿ ಸೊರಾಬ್ಜಿ ಸಮಿತಿ ವರೆಗೆ ಹಲವು ವರದಿಗಳು ಬಂದಿವೆ. ಯಾವ ಸರ್ಕಾರವೂ ಅವುಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡಿಲ್ಲ. ಕೊನೆಗೆ ಈ ಎಲ್ಲ ಆಯೋಗ-ಸಮಿತಿಗಳ ವರದಿಗಳನ್ನು ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್ ಪೊಲೀಸ್ ಸುಧಾರಣೆಗಾಗಿ ಕೆಲವು ಸಲಹೆಗಳನ್ನು ನೀಡಿ 2006ರ ಅಂತ್ಯದೊಳಗೆ ಇದನ್ನು ಜಾರಿಗೊಳಿಸುವಂತೆ ಆದೇಶ ನೀಡಿದೆ. ಆದರೆ ಕರ್ನಾಟಕವೂ ಸೇರಿದಂತೆ ಹೆಚ್ಚಿನ ರಾಜ್ಯಗಳು ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಜಾರಿಗೊಳಿಸಿಲ್ಲ. ರಾಜಕೀಯ ಒಡೆಯರ `ಬಂಧನ'ದಲ್ಲಿರುವ ಪೊಲೀಸ್ ಇಲಾಖೆಯನ್ನು ಬಿಡುಗಡೆಗೊಳಿಸದಿದ್ದರೆ ಅದರ ಸುಧಾರಣೆ ಅಸಾಧ್ಯ.
ಮುಂಬೈನ 9/11ಭಯೋತ್ಪಾದಕ ಕೃತ್ಯ ನಡೆದ ನಂತರ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸೌಹಾರ್ದದ ಕೊರತೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಿತು. ಆ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಮುಖ್ಯವಾಗಿ ಹೊರಹೊಮ್ಮಿದ್ದು ಅಮೆರಿಕದ ಎಫ್‌ಬಿಐ ಮಾದರಿಯಲ್ಲಿ ಭಾರತದಲ್ಲಿಯೂ ಫೆಡರಲ್ ತನಿಖಾ ವ್ಯವಸ್ಥೆ ಸ್ಥಾಪನೆ ಮಾಡಬೇಕೆಂಬ ಬೇಡಿಕೆ. ಯಥಾಪ್ರಕಾರ ಇದು `ಒಕ್ಕೂಟ ವ್ಯವಸ್ಥೆಯ ವಿರೋಧಿ' ಎಂಬ ಕೂಗು ಕೇಳಿಬಂದರೂ ಕೇಂದ್ರ ಸರ್ಕಾರ `ರಾಷ್ಟ್ರೀಯ ತನಿಖಾ ಸಂಸ್ಥೆ' (ಎನ್‌ಐಎ)ಯನ್ನು ಐದು ವರ್ಷಗಳ ಹಿಂದೆ ಸ್ಥಾಪಿಸಿತು.
ಭಯೋತ್ಪಾದನೆಯಂತಹ ರಾಷ್ಟ್ರೀಯ ಅಪರಾಧಗಳ ತನಿಖೆ ನಡೆಸುವ ಎನ್‌ಐಎಗೆ ಕಾರ್ಯವ್ಯಾಪ್ತಿಯ ನಿರ್ಬಂಧ ಇಲ್ಲ. ರಾಜ್ಯಗಳಿಗೆ ಹೋಗಿ ತನಿಖೆ ನಡೆಸಲು ಸಿಬಿಐ ರೀತಿಯಲ್ಲಿ ಎನ್‌ಐಎಗೆ ರಾಜ್ಯಸರ್ಕಾರಗಳ ಅನುಮತಿ ಬೇಕಾಗಿಲ್ಲ. ರಾಜ್ಯಗಳ ಒಳಹೊಕ್ಕು ತನಿಖೆ ನಡೆಸುವ ಸ್ವಾತಂತ್ರ್ಯ  ಇದ್ದರೂ ರಾಜ್ಯಗಳಲ್ಲಿ ಪ್ರತ್ಯೇಕ ಸಿಬ್ಬಂದಿ ಇಲ್ಲದ ಈ ಸಂಸ್ಥೆ ಮತ್ತೆ ರಾಜ್ಯಪೊಲೀಸರನ್ನೇ ಅವಲಂಬಿಸಬೇಕಾಗಿದೆ.
ಇದರ ಜತೆಗೆ ಸ್ಥಾಪಿಸಲಾದ ಅಪರಾಧಿಗಳ ಸಂಪೂರ್ಣ ಡಾಟಾಬೇಸ್ ಹೊಂದಿರುವ `ನ್ಯಾಟ್‌ಗ್ರಿಡ್' ಕೂಡಾ ಕುಂಟುತ್ತಾ ಸಾಗಿದೆ. ಈಗ ಭಯೋತ್ಪಾದನೆಗೆ ಸಂಬಂಧಿಸಿದ ಅಪರಾಧಗಳ ವಿಚಾರಣೆಗೆ ಸಂಬಂಧಿಸಿದಂತೆ ಎಲ್ಲ ಬೇಹುಗಾರಿಕಾ ಸಂಸ್ಥೆಗಳ ಜತೆ ಸಮನ್ವಯ ಸಾಧಿಸಲು `ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ಕೇಂದ್ರ' (ಎನ್‌ಸಿಟಿಸಿ) ಸ್ಥಾಪಿಸಲು ಕೇಂದ್ರ ಹೊರಟಿದೆ. ರಾಜ್ಯಗಳು ಇದನ್ನು ವಿರೋಧಿಸತೊಡಗಿವೆ.
ಇಂತಹ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿರುವ ಬೇಹುಗಾರಿಕಾ ವ್ಯವಸ್ಥೆಯಿಂದ ಯಾವ ಕಸಬುಗಾರಿಕೆಯನ್ನು ನಿರೀಕ್ಷಿಸಲು ಸಾಧ್ಯ? ಸಹಜವಾಗಿ ಅವುಗಳು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಅಡ್ಡಮಾರ್ಗಗಳನ್ನು ಅನುಸರಿಸುತ್ತವೆ. ಸಾಮಾನ್ಯವಾಗಿ ಬೇಹುಗಾರಿಕೆ ಸಂಸ್ಥೆಗಳು ನೀಡುವ ಮಾಹಿತಿ ನಮ್ಮ ಜೋತಿಷಿಗಳು ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿಯಲ್ಲಿ ನುಡಿಯುವ ಭವಿಷ್ಯವಾಣಿಯಂತಿರುತ್ತವೆ.
ನುಡಿದ ಭವಿಷ್ಯ ನಿಜವಾಗಲಿ, ಸುಳ್ಳಾಗಲಿ ಜೋತಿಷಿಗಳ ಬಳಿ ಸಮರ್ಥನೆಗಳು ಇದ್ದೇ ಇರುತ್ತವೆ. ಕಸಬ್ ಮತ್ತು ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನಂತರ ಜೆಹಾದಿಗಳು ಪ್ರತೀಕಾರಾತ್ಮಕ ದಾಳಿ ನಡೆಸಬಹುದೆಂಬ ಆತಂಕ ಎಲ್ಲರಲ್ಲಿಯೂ ಇದ್ದೇ ಇತ್ತು. ಈ ಸಂದರ್ಭದಲ್ಲಿ ನಾಲ್ಕೈದು ರಾಜ್ಯಗಳಿಗೆ ಒಂದು ಎಚ್ಚರಿಕೆಯನ್ನು ನೀಡಿ ಬಿಟ್ಟರೆ, ಆಕಸ್ಮಾತ್ ದಾಳಿ ನಡೆದರೂ ತಮ್ಮ ಹೊಣೆಯಿಂದ ಜಾರಿಕೊಳ್ಳಲು  ಅವಕಾಶ ಇರುತ್ತದೆ ಎನ್ನುವುದು ಐಬಿಯ ದೂರಾಲೋಚನೆ. ಕೈಗೆ ಸಿಕ್ಕ ಮಾಹಿತಿಗಳನ್ನೆಲ್ಲ ರಾಜ್ಯಗಳ ಕಡೆ ಹೊತ್ತು ಹಾಕುವುದಷ್ಟೆ ಆಗಿದ್ದರೆ ಕೋಟ್ಯಂತರ ರೂಪಾಯಿ ತೆರಿಗೆಹಣ ವ್ಯಯವಾಗುತ್ತಿರುವ ಗುಪ್ತಚರ ಸಂಸ್ಥೆಗಳು ಯಾಕೆ ಬೇಕು? ಅಂಚೆಕಚೇರಿಗಳು ಸಾಕಾಗುವುದಿಲ್ಲವೇ? ಮಾಹಿತಿ ನೀಡಿದ ನಂತರ ರಾಜ್ಯದ ಪೊಲೀಸರು ಏನು ಕ್ರಮಕೈಗೊಂಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವುದು ಬೇಡವೇ?
ಆದರೆ ಪೊಲೀಸರನ್ನು ನ್ಯಾಯಾಂಗ ಮತ್ತು ಶಾಸಕಾಂಗ ಪ್ರಶ್ನಿಸಿದಂತೆ `ರಾ' ಮತ್ತು `ಐಬಿ'ಯನ್ನು ಪ್ರಶ್ನಿಸಲು ಅವಕಾಶ ಇಲ್ಲದಿರುವುದು ಕೂಡಾ ಈ ಸಂಸ್ಥೆಗಳ ವೈಫಲ್ಯಕ್ಕೆ ಕಾರಣ.  ಕೇವಲ `ರಾ' ಒಂದಕ್ಕೆ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳ ವಿವೇಚನಾ  ನಿಧಿಯನ್ನು ಬಜೆಟ್‌ನಲ್ಲಿ ನೀಡಲಾಗುತ್ತದೆ. ಈ ಹಣದ ಖರ್ಚಿನ ವಿವರವನ್ನು ಕೇಳಲು ಅವಕಾಶ ಇಲ್ಲ.
ವಿದೇಶಗಳಲ್ಲಿರುವ `ರಾ' ಏಜಂಟರು ಇದ್ದಕ್ಕಿದ್ದ ಹಾಗೆ ಡಬಲ್ ಏಜೆಂಟ್‌ಗಳಾಗಿ ಕಣ್ಮರೆಯಾಗುತ್ತಿರುತ್ತಾರೆ. ಈಗಲೂ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಕೆಲಸ ಮಾಡಲು ಹೆಚ್ಚಿನವರು ಒಪ್ಪುವುದಿಲ್ಲವಾದ ಕಾರಣ ಅಲ್ಲಿನ `ರಾ' ಏಜೆಂಟ್ ಹುದ್ದೆಗಳು ಪೂರ್ತಿ ಭರ್ತಿಯಾಗಿಲ್ಲ. ಸಾಮಾನ್ಯ ಜನತೆಯನ್ನು ಬಿಡಿ, ಸಂಸತ್‌ನಲ್ಲಿ ಕೂತಿರುವ ನಮ್ಮ ಪ್ರತಿನಿಧಿಗಳಿಗೂ ಈ ಸಂಸ್ಥೆಗಳ ಬಗ್ಗೆ ಇರುವ ಮಾಹಿತಿ ಅಷ್ಟಕ್ಕಷ್ಟೇ. ಯಾಕೆಂದರೆ ಬೇಹುಗಾರಿಕಾ ಸಂಸ್ಥೆಗಳಿಗೆ ಬಜೆಟ್‌ನಲ್ಲಿ ನೀಡಲಾಗುವ ಹಣ ಇಲ್ಲವೇ ಅದರ ಕಾರ್ಯನಿರ್ವಹಣೆ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸುವಂತಿಲ್ಲ.
ಇದರಿಂದಾಗಿ ಇವುಗಳ ಅಂತರಂಗ ಬಹಿರಂಗಗೊಳ್ಳುವುದೇ ಇಲ್ಲ. ಅಮೆರಿಕದ ಎಫ್‌ಬಿಐ ಕೂಡಾ ಅಲ್ಲಿನ ಕಾಂಗ್ರೆಸ್‌ನ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಜರ್ಮನಿ, ಫ್ರಾನ್ಸ್, ಅಸ್ಟ್ರೇಲಿಯಾ ಸೇರಿದಂತೆ ಬಹುತೇಕ ದೇಶಗಳ ಗುಪ್ತಚರ ಸಂಸ್ಥೆಗಳು ಅಲ್ಲಿನ ಸಂಸತ್‌ಗೆ ಉತ್ತರದಾಯಿಯಾಗಿವೆ. ಬ್ರಿಟನ್‌ನಲ್ಲಿ ಸ್ವತಂತ್ರ ಸಮಿತಿಯಿಂದ ಪರಿಶೀಲನೆ ನಡೆಸುವ ವ್ಯವಸ್ಥೆ ಇದೆ. ಆದರೆ ಭಾರತದಲ್ಲಿ ಮಾತ್ರ ಯಾಕೆ `ಪವಿತ್ರ ಗೋವಿನ' ಪಟ್ಟಕಟ್ಟಿ ವಿಶೇಷ ರಕ್ಷಣೆ ನೀಡಲಾಗಿದೆಯೋ ಗೊತ್ತಿಲ್ಲ.
ಬೇಹುಗಾರಿಕಾ ಸಂಸ್ಥೆಗಳನ್ನು ಕನಿಷ್ಠ ಸಂಸತ್‌ಗೆ ಉತ್ತರದಾಯಿಯನ್ನಾಗಿ ಮಾಡಿ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತಂದರೆ ಅವುಗಳು ಸುಧಾರಣೆಯಾಗಬಹುದೇನೋ?

Sunday, February 17, 2013

ಕಾವೇರಿ ಐತೀರ್ಪಿನ ಆಚೆಗೂ ಬದುಕು ಇದೆ

ಕಾವೇರಿ ಐತೀರ್ಪಿನ ಅಧಿಸೂಚನೆಯ ಪ್ರಕಟಣೆ ಎಂದರೆ `ಶವದ ಪೆಟ್ಟಿಗೆಗೆ ಕೊನೆಯ ಮೊಳೆ'ಯೇನಲ್ಲ, ಅದರಾಚೆಗೂ ಬದುಕಿದೆ. ಆ ಬದುಕಿನಲ್ಲಿ ಮಳೆ-ಬೆಳೆ, ರಾಜ್ಯ-ರಾಜ್ಯಗಳ ನಡುವೆ ನೀರಿನ ಜಗಳ, ನ್ಯಾಯಾಲಯ - ನ್ಯಾಯಮಂಡಳಿಗಳಲ್ಲಿ ವ್ಯಾಜ್ಯ, ರೈತರ ಪ್ರತಿಭಟನೆ, ರಾಜಕಾರಣಿಗಳ ಆತ್ಮವಂಚನೆ ಎಲ್ಲವೂ ಇರುತ್ತವೆ.
`ಎಲ್ಲವೂ ಮುಗಿದು ಹೋಗುತ್ತದೆ' ಎಂದು ಹುಯಿಲೆಬ್ಬಿಸುತ್ತಿರುವ ನಮ್ಮ ರಾಜಕಾರಣಿಗಳಲ್ಲಿ ಕೆಲವರು ಎಲ್ಲವೂ ಗೊತ್ತಿದ್ದು ಸುಳ್ಳು ಹೇಳುತ್ತಿದ್ದಾರೆ, ಉಳಿದವರು ಏನೂ ಗೊತ್ತಿಲ್ಲದೆ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಿದ್ದಾರೆ. ಐತೀರ್ಪಿನ ಅಧಿಸೂಚನೆಯ ಪ್ರಕಟಣೆಗೆ ಅಭ್ಯಂತರ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ತಲೆಬಾಗಿದೆ. ಅದರಂತೆ ಕೊನೆಯ ದಿನಾಂಕವನ್ನೂ ಸುಪ್ರೀಂಕೋರ್ಟ್ ನಿಗದಿಪಡಿಸಿದೆ. ಇನ್ನೂ ಅದನ್ನು ತಡೆಯುವುದು ಸಾಧ್ಯ ಇಲ್ಲ. ನೀರಲ್ಲಿ ಗುದ್ದಾಡುವ ಈ ವ್ಯರ್ಥಪ್ರಯತ್ನವನ್ನು ಕೈಬಿಟ್ಟು ಅಧಿಸೂಚನೆಯ ಪ್ರಕಟಣೆಯನ್ನು ನಮ್ಮ ಅನುಕೂಲತೆಗೆ ಬಳಸಿಕೊಳ್ಳುವುದು ಹೇಗೆ ಎಂಬ ಯೋಚನೆ ಮಾಡುವುದು ಜಾಣತನ. ತಮಿಳುನಾಡಿನ ರಾಜಕಾರಣಿಗಳು ನಮ್ಮವರಿಗಿಂತ ಜಾಣರು, ಬಹುಶಃ ಅವರು ಈಗಾಗಲೇ ಈ ಪ್ರಯತ್ನದಲ್ಲಿದ್ದಾರೆ.
`ಅಧಿಸೂಚನೆ ಹೊರಡಿಸಿದರೂ  ಅದು ಐತೀರ್ಪನ್ನು ಪ್ರಶ್ನಿಸುವ ಸಂಬಂಧಿತ ರಾಜ್ಯಗಳ ಹಕ್ಕು ಮತ್ತು ಈಗ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅಡ್ಡಿಯಾಗುವುದಿಲ್ಲ' ಎಂದು ಸಾಕ್ಷಾತ್ ಸುಪ್ರೀಂಕೋರ್ಟ್ ಹೇಳಿದ ನಂತರ `ಶವದ ಪೆಟ್ಟಿಗೆಗೆ ಕೊನೆಯ ಮೊಳೆ' ಆಗುವುದಾದರೂ ಹೇಗೆ? ಇಂತಹ ಅಪಾಯ ಇರುವುದೇ ನಿಜವಾಗಿದ್ದರೆ, 2007ರಲ್ಲಿ ಅಂತಿಮ ಐತೀರ್ಪಿನ ಕೆಲವು ಅಂಶಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದಾಗ ಐತೀರ್ಪಿನ ಅಧಿಸೂಚನೆ ಪ್ರಕಟಣೆಯನ್ನು ರಾಜ್ಯ ಸರ್ಕಾರ ಯಾಕೆ ವಿರೋಧಿಸಿರಲಿಲ್ಲ?
ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಣದಿದ್ದ ಅಪಾಯ ಈಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾದಿಯಾಗಿ ಎಲ್ಲರಿಗೂ ಯಾಕೆ ಕಾಣತೊಡಗಿದೆ? ಅಧಿಸೂಚನೆ ಹೊರಡಿಸುವುದರಿಂದ ಕರ್ನಾಟಕಕ್ಕೆ ಆಗಲಿರುವ ಬಹುದೊಡ್ಡ ಲಾಭ ಎಂದರೆ ಕಳೆದ 23 ವರ್ಷಗಳಿಂದ ನಮ್ಮ ಕೊರಳಿಗೆ ನೇಣಿನಂತೆ ಸುತ್ತಿಕೊಂಡಿರುವ ಕಾವೇರಿ ನ್ಯಾಯಮಂಡಳಿಯ ಮಧ್ಯಂತರ ಐತೀರ್ಪಿನಿಂದ ಮುಕ್ತಿ. ಯಾವ ಕೋನದಿಂದ ಅಧ್ಯಯನ ನಡೆಸಿದರೂ ಮಧ್ಯಂತರ ಐತೀರ್ಪಿಗಿಂತ ಅಂತಿಮ ತೀರ್ಪು ಕರ್ನಾಟಕದ ರೈತರಿಗೆ ಹೆಚ್ಚು ಲಾಭವನ್ನುಂಟು ಮಾಡಲಿದೆ ಎನ್ನುವ ಸತ್ಯವನ್ನು ಒಪ್ಪಿಕೊಳ್ಳದೆ ಇರಲಾಗದು. ಹೀಗಿದ್ದರೂ ಕಳೆದ ಐದು ವರ್ಷಗಳಿಂದ ಮಧ್ಯಂತರ ಐತೀರ್ಪನ್ನು ಕೊರಳಿಗೆ ಕಟ್ಟಿಕೊಂಡು ಕರ್ನಾಟಕ ಯಾಕೆ ಸಂಕಟಪಡುತ್ತಿದೆಯೋ ಗೊತ್ತಿಲ್ಲ.
ಹೌದು, ಅಂತಿಮ ಐತೀರ್ಪಿನಲ್ಲಿ ಎಲ್ಲವೂ ನಮ್ಮ ಪರವಾಗಿ ಇಲ್ಲ, ಸಾಕಷ್ಟು ಅನ್ಯಾಯವಾಗಿದೆ. ಸಂಕಷ್ಟದ ಕಾಲವಾದ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ತಮಿಳುನಾಡಿಗೆ ಹರಿಸಬೇಕಾಗಿರುವ ನೀರಿನ ಪ್ರಮಾಣ ತಗ್ಗಿಲ್ಲ, ಬೆಂಗಳೂರು ಮಹಾನಗರ ಸೇರಿದಂತೆ ಕಾವೇರಿ ಕಣಿವೆ ಪ್ರದೇಶದ ಜನತೆಗೆ ಅವಶ್ಯ ಇರುವಷ್ಟು ಪ್ರಮಾಣದಲ್ಲಿ ಕುಡಿಯುವ ನೀರಿನ ಪಾಲು ಒದಗಿಸಿಲ್ಲ, ಅಂತರ್ಜಲದ ನೆಪದಲ್ಲಿ ಕರ್ನಾಟಕದ ಚರಂಡಿ ನೀರನ್ನೂ ಲೆಕ್ಕ ಹಾಕಿರುವ ನ್ಯಾಯಮಂಡಳಿ ತಮಿಳುನಾಡಿನ ಕಾವೇರಿ ಕಣಿವೆ ಪ್ರದೇಶದಲ್ಲಿನ ಅಂತರ್ಜಲದ ಬಗ್ಗೆ ಚಕಾರ ಎತ್ತಿಲ್ಲ.
1924ರ ಒಪ್ಪಂದದಿಂದ ಕರ್ನಾಟಕವನ್ನು ಮುಕ್ತಗೊಳಿಸಿದರೂ ಅದೇ ಒಪ್ಪಂದದ ಬಲದಿಂದ ತಮಿಳುನಾಡು ಯದ್ವಾತದ್ವಾ ಹೆಚ್ಚು ಮಾಡಿಕೊಂಡಿರುವ 24.71 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶದ ರಕ್ಷಣೆಗೆ 419 ಟಿಎಂಸಿ ನೀರು ಒದಗಿಸಿರುವ ನ್ಯಾಯಮಂಡಳಿ, ಕರ್ನಾಟಕ ಕೇಳಿಕೊಂಡಿರುವ 25.27 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶವನ್ನು ಒಪ್ಪಿಕೊಂಡಿಲ್ಲ, 381 ಟಿಎಂಸಿ ನೀರಿನ ಪಾಲನ್ನೂ ನೀಡಿಲ್ಲ.  ಕೇರಳ ರಾಜ್ಯಕ್ಕೆ ಈಗ ಕೇವಲ 9 ಟಿಎಂಸಿಯಷ್ಟೇ ಬಳಸಲು ಸಾಧ್ಯ ಇದ್ದರೂ ಅಲ್ಲಿಗೆ 21 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಹೇಳಿ ಆ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ಮಾಡಿಕೊಟ್ಟಿರುವ ನ್ಯಾಯಮಂಡಳಿ ಅಂತಹ ಔದಾರ್ಯವನ್ನು ಕರ್ನಾಟಕಕ್ಕೆ ತೋರಿಸಿಲ್ಲ....ಹೀಗೆ ಆಗಿರುವ ಅನ್ಯಾಯದ ಪಟ್ಟಿಯನ್ನು ಬೆಳೆಸುತ್ತಾ ಹೋಗಬಹುದು.
ಅಂತಿಮ ಐತೀರ್ಪಿನಿಂದ ಕರ್ನಾಟಕಕ್ಕೆ ಒಂದಷ್ಟು ಅನುಕೂಲಗಳೂ ಆಗಿವೆ. ಮುಖ್ಯವಾಗಿ ಕಳೆದ ಕೆಲವು ದಶಕಗಳಿಂದ ತಲೆ ಮೇಲೆ ಇದ್ದ 1924ರ ಒಪ್ಪಂದದ ತೂಗುಕತ್ತಿಯಿಂದ ಶಾಶ್ವತ ಮುಕ್ತಿ ಸಿಕ್ಕಿದೆ. ಮಧ್ಯಂತರ ಐತೀರ್ಪಿನಲ್ಲಿದ್ದ 11.24 ಲಕ್ಷ ಎಕರೆ ಮೇಲಿನ ನಿರ್ಬಂಧ ರದ್ದಾಗಿದೆ. ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನಿಗದಿಪಡಿಸಿರುವ ನೀರಿನ ಪಾಲನ್ನು ನೀಡಿದ ನಂತರ ಉಳಿಯುವ ಹೆಚ್ಚುವರಿ ನೀರಿನ ಬಳಕೆಯ ಹಕ್ಕನ್ನು ಸಂಪೂರ್ಣವಾಗಿ ಕರ್ನಾಟಕಕ್ಕೆ ನೀಡಲಾಗಿದೆ. ಕೇಂದ್ರ ಜಲ ಆಯೋಗದ ನಿಯಂತ್ರಣದಲ್ಲಿರುವ ಬಿಳಿಗುಂಡ್ಲು ಜಲಮಾಪನ ಕೇಂದ್ರದ ನೀರಿನ ಲೆಕ್ಕವೇ ಅಧಿಕೃತ ಎಂದು ಹೇಳುವ ಮೂಲಕ ತಮಿಳುನಾಡಿನ ಮೋಸದ ಲೆಕ್ಕಕ್ಕೆ ಕಡಿವಾಣ ಹಾಕಿದೆ.
ಕರ್ನಾಟಕಕ್ಕೆ ಆಗಿರುವ `ಅನ್ಯಾಯ'ದ ವಿರುದ್ಧ ಹೋರಾಟ ನಡೆಯಲೇಬೇಕು. ನ್ಯಾಯಾಲಯದಲ್ಲಿ ಕಾನೂನಿನ ಹೋರಾಟ, ಕೇಂದ್ರ ಸರ್ಕಾರದ ಜತೆ ರಾಜಕೀಯ ಹೋರಾಟ, ಸರ್ವಪಕ್ಷಗಳ ನಿಯೋಗ, ತಜ್ಞರ ಜತೆ ಸಮಾಲೋಚನೆ, ಪ್ರತಿಭಟನೆ, ಪಾದಯಾತ್ರೆ...ಎಲ್ಲವೂ ನಡೆಯಬೇಕು. ಇದರ ಜತೆಯಲ್ಲಿ ಐತೀರ್ಪಿನಲ್ಲಿ ನಮಗೆ ಸಿಕ್ಕಿರುವ `ನ್ಯಾಯ'ದ ಅನುಕೂಲಗಳನ್ನು ಬಳಸಿಕೊಳ್ಳಲು ಪ್ರಯತ್ನ ನಡೆಸುವುದು ಬೇಡವೇ? ಇದಕ್ಕಾಗಿ ರಾಜ್ಯ ಸರ್ಕಾರ ಏನು ಮಾಡಿದೆ? ಇಂತಹ ಬಿಕ್ಕಟ್ಟು ಎದುರಾದಾಗೆಲ್ಲ ನಮ್ಮ ಈವರೆಗಿನ ಎಲ್ಲ ಸರ್ಕಾರಗಳು ತಮಿಳುನಾಡು ಎಂಬ `ಭೂತ'ವನ್ನು ಪ್ರತಿಭಟನಕಾರರ ಮುಂದೆ ತಂದು ನಿಲ್ಲಿಸುತ್ತಾ ಬಂದಿವೆ.
ರೋಷತಪ್ತ ಜನ ಕೂಡಿ ಆ `ಭೂತ'ಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟುಹಾಕಿ ಕೋಪ ಶಮನಮಾಡಿಕೊಳ್ಳುತ್ತಾರೆ. ಆದರೆ ಪಕ್ಕದಲ್ಲಿಯೇ ಇರುವ ಹಿತಶತ್ರುವಿನ ಕಡೆ ಯಾರ ಗಮನವೂ ಹೋಗುವುದಿಲ್ಲ. ಯಾರೂ ಅದೇ ಗಟ್ಟಿ ದನಿಯಲ್ಲಿ ಜನಪ್ರತಿನಿಧಿಗಳ ಕರ್ತವ್ಯಲೋಪವನ್ನು ಪ್ರಶ್ನಿಸಲು ಹೋಗುವುದಿಲ್ಲ. ನೆಲ-ಜಲ-ಭಾಷೆಯಂತಹ ಭಾವನಾತ್ಮಕ ವಿಷಯಗಳಿಗೆ ಸಂಬಂಧಿಸಿದ ವಿವಾದದ ಸಮಯದಲ್ಲಿ ಸಿಡಿದೇಳುವ ಭಾವುಕ ಜನರನ್ನು ಹೇಗೆ ಪಳಗಿಸಬೇಕೆಂಬುದು ನಮ್ಮ ರಾಜಕಾರಣಿಗಳಿಗೆ ಚೆನ್ನಾಗಿ ಗೊತ್ತಿರುವುದರಿಂದ ಇವೆಲ್ಲವೂ ನಡೆಯುತ್ತಾ ಬಂದಿದೆ.
1924ರ ಒಪ್ಪಂದದ ಪ್ರಕಾರ ಕರ್ನಾಟಕದ ಅಚ್ಚುಕಟ್ಟು ಪ್ರದೇಶ 2,35,000 ಎಕರೆ, ಬಳಸಬಹುದಾದ ನೀರಿನ ಪಾಲು ಕೇವಲ 89.82 ಟಿಎಂಸಿ ಆಗಿತ್ತು. ಮಧ್ಯಂತರ ಐತೀರ್ಪಿನಲ್ಲಿ ಈ ಅಚ್ಚುಕಟ್ಟು ಪ್ರದೇಶವನ್ನು 11.24 ಲಕ್ಷ ಎಕರೆವರೆಗೆ ವಿಸ್ತರಿಸಲಾಯಿತು. ಕಾವೇರಿ ನ್ಯಾಯಮಂಡಳಿಯ ಮುಂದೆ ರಾಜ್ಯ ಸರ್ಕಾರ ಆ ಕಾಲದಲ್ಲಿ ಹೇಳಿಕೊಂಡಿರುವ ಪ್ರಕಾರ ನಮ್ಮ ಅಚ್ಚುಕಟ್ಟು ಅಭಿವೃದ್ಧಿಯ ಗುರಿ 27 ಲಕ್ಷ ಎಕರೆ. ಇದರಲ್ಲಿ 24 ಲಕ್ಷ ಎಕರೆ ಅಚ್ಚುಕಟ್ಟು ಅಭಿವೃದ್ಧಿಗೆ ಯೋಜನೆ ಸಿದ್ದ ಇದೆ ಎಂದು ಸರ್ಕಾರ ತಿಳಿಸಿತ್ತು.
ನ್ಯಾಯಮಂಡಳಿ ಕೇವಲ 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿಪಡಿಸಬೇಕೆಂದು ಆದೇಶಿಸಿ ಅದಕ್ಕೆ 250 ಟಿಎಂಸಿ ನೀರಿನ ಪಾಲನ್ನಷ್ಟೆ ನೀಡಿ ಅನ್ಯಾಯ ಮಾಡಿರುವುದು ನಿಜ. ಆದರೆ ಹೆಚ್ಚುವರಿ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ಸಿಕ್ಕಿರುವ ಅವಕಾಶವನ್ನಾದರೂ ಬಳಸಿಕೊಳ್ಳುವುದು ಬೇಡವೇ? 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದಾಗಿ 2010ರಲ್ಲಿಯೇ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮತ್ತು ತಮಿಳುನಾಡು ಸರ್ಕಾರಕ್ಕೆ ತಿಳಿಸಿತ್ತು. ಈ 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಮಾನ್ಯತೆ ಪಡೆಯಲಿಕ್ಕಾದರೂ ಅಂತಿಮ ಐತೀರ್ಪು ಅಧಿಸೂಚನೆ ಪ್ರಕಟವಾಗಬೇಕಲ್ಲವೇ?
ಅಂತಿಮ ಐತೀರ್ಪಿನಿಂದ ನಮ್ಮ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಮಾತ್ರ ಅಲ್ಲ, ಹೆಚ್ಚುವರಿ ನೀರಿನ ಬಳಕೆಗೂ ಅವಕಾಶ ಸಿಗಲಿದೆ. ನ್ಯಾಯಮಂಡಳಿ ರಾಜ್ಯಕ್ಕೆ ಅಧಿಕೃತವಾಗಿ ನೀಡಿರುವ ಪಾಲು 270 ಟಿಎಂಸಿಯಾದರೂ ರಾಜ್ಯ ಬಳಸಲು ಅವಕಾಶ ನೀಡಿರುವ ಹೆಚ್ಚುವರಿ ನೀರಿನ ಪಾಲನ್ನು ಸೇರಿಸಿದರೆ ಇದು ಸುಮಾರು 310 ಟಿಎಂಸಿ ಆಗಲಿದೆ ಎಂದು ಹೇಳುತ್ತಿದೆ ಒಳಲೆಕ್ಕ.
1972-73ರಿಂದ 2004-05ರಿಂದ ಇಲ್ಲಿಯವರೆಗೆ ಬಿಳಿಗುಂಡ್ಲು ಜಲಮಾಪನದವರೆಗಿನ ನೀರಿನ ಸರಾಸರಿ ಉತ್ಪನ್ನ 538 ಟಿಎಂಸಿ. ಅಂತಿಮ ಐತೀರ್ಪಿನ ಪ್ರಕಾರ ತಮಿಳುನಾಡಿಗೆ 192 ಟಿಎಂಸಿ ಮತ್ತು ಕೇರಳಕ್ಕೆ 21 ಟಿಎಂಸಿ ನೀರು  ಹರಿಸಿದರೆ ನಮಗೆ ಉಳಿಯುವ ನೀರಿನ ಪ್ರಮಾಣ ಸುಮಾರು 325 ಟಿಎಂಸಿ. ಅಂತಿಮ ಐತೀರ್ಪಿನಲ್ಲಿ ನಮಗೆ ಅಧಿಕೃತವಾಗಿ 270 ಟಿಎಂಸಿ ನೀರನ್ನಷ್ಟೇ ನಿಗದಿಪಡಿಸಲಾಗಿದ್ದರೂ ಸಾಮಾನ್ಯ ಮಳೆಗಾಲದಲ್ಲಿ ನಮಗೆ ಹೆಚ್ಚುವರಿಯಾಗಿ ಸುಮಾರು 55 ಟಿಎಂಸಿ ನೀರು ಸಿಗಲಿದೆ. ಈ ನೀರಿನ ಬಳಕೆಗೆ ಸಂಬಂಧಿಸಿದಂತೆ ಅಂತಿಮ ಐತೀರ್ಪಿನಲ್ಲಿ ಯಾವ ನಿರ್ಬಂಧವನ್ನು ಹೇರಲಾಗಿಲ್ಲ. ಆದರೆ ಈ ನೀರು ಬಳಸಿಕೊಳ್ಳುವ ಎಷ್ಟು ನೀರಾವರಿ ಯೋಜನೆಗಳ ನೀಲಿನಕ್ಷೆಗಳನ್ನು ನಮ್ಮ ಸರ್ಕಾರ ಸಿದ್ದ ಮಾಡಿಟ್ಟುಕೊಂಡಿದೆ?
ಕೊನೆಯದಾಗಿ ಅಂತಿಮ ಐತೀರ್ಪಿನ ಅಧಿಸೂಚನೆ ಹೊರಡಿಸಿದ ಕೂಡಲೇ `ಕಾವೇರಿ ನಿರ್ವಹಣಾ ಮಂಡಳಿ' ಅಸ್ತಿತ್ವಕ್ಕೆ ಬಂದು ನಮ್ಮ ಜಲಾಶಯಗಳ ಮೇಲಿನ ಅಧಿಕಾರವನ್ನು ರಾಜ್ಯ ಕಳೆದುಕೊಳ್ಳಲಿದೆ ಎಂಬ ಆತಂಕದಲ್ಲಿ ಏನಾದರೂ ಹುರುಳಿದೆಯೇ? ವಾಸ್ತವ ಸಂಗತಿ ಏನೆಂದರೆ ಅಧಿಸೂಚನೆ ಹೊರಡಿಸಲಿಕ್ಕಷ್ಟೇ ಸುಪ್ರೀಂಕೋರ್ಟ್ ಹೇಳಿದೆ, `ಮಂಡಳಿ' ರಚನೆಯಾಗಬೇಕಾದರೆ ಕೇಂದ್ರ ಸರ್ಕಾರ ಅಂತರರಾಜ್ಯ ಜಲ ವಿವಾದ ಕಾಯಿದೆಯ 6 (ಎ) ಪ್ರಕಾರ ಇನ್ನೊಂದು ಅಧಿಸೂಚನೆ ಹೊರಡಿಸಬೇಕಾಗುತ್ತದೆ.
ಅದಕ್ಕೆ ಸಂಸತ್ ಅಂಗೀಕಾರ ನೀಡಬೇಕಾಗಿರುವುದರಿಂದ ಅದೊಂದು ಪ್ರತ್ಯೇಕ ಕಸರತ್ತು. ಮಂಡಳಿ ಸ್ಥಾಪನೆಯಾದರೂ ಅದೇನು ಪ್ರಧಾನಿ ಅಧ್ಯಕ್ಷರಾಗಿರುವ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಸದಸ್ಯರಾಗಿರುವ ಕಾವೇರಿ ನದಿ ಪ್ರಾಧಿಕಾರ (ಸಿಆರ್‌ಎ) ಇಲ್ಲವೆ ಕೇಂದ್ರ ಜಲಸಂಪನ್ಮೂಲ ಖಾತೆಯ ಕಾರ್ಯದರ್ಶಿ ಅಧ್ಯಕ್ಷರಾಗಿರುವ ಮತ್ತು ರಾಜ್ಯದ ಮುಖ್ಯಕಾರ್ಯದರ್ಶಿಗಳು ಸದಸ್ಯರಾಗಿರುವ ಕಾವೇರಿ ಉಸ್ತುವಾರಿ ಸಮಿತಿ (ಸಿಎಂಸಿ)ಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿ ಇರಲಾರದು.
ನ್ಯಾಯಮಂಡಳಿಯ ಶಿಫಾರಸಿನ ಪ್ರಕಾರ ಅಸ್ತಿತ್ವಕ್ಕೆ ಬರಲಿರುವ `ಕಾವೇರಿ ನಿರ್ವಹಣಾ ಮಂಡಳಿ' ಮತ್ತು `ಕಾವೇರಿ ನದಿ ನಿಯಂತ್ರಣಾ ಸಮಿತಿ'ಯಲ್ಲಿ ಯಾವ ಜನಪ್ರತಿನಿಧಿಗೂ ಪ್ರಾತಿನಿಧ್ಯ ಇಲ್ಲ. ನೀರಾವರಿ,ಕೃಷಿ, ಹವಾಮಾನ ತಜ್ಞರು ಮತ್ತು ಕೆಲವು ಅಧಿಕಾರಿಗಳನ್ನೊಳಗೊಂಡ ಈ `ಬಿಳಿ ಆನೆ'ಯ ರಚನೆಗೆ ಸಂಸತ್ ಅಂಗೀಕಾರ ನೀಡಬೇಕು. ತಮಗೆ ಪ್ರಾತಿನಿಧ್ಯ ಇಲ್ಲದ ಈ `ಮಂಡಳಿ', `ಸಮಿತಿ'ಗಳ ರಚನೆಗೆ ಕಾವೇರಿ ನದಿ ಕಣಿವೆಯ ರಾಜ್ಯಗಳ ಜನಪ್ರತಿನಿಧಿಗಳು ಅಷ್ಟೊಂದು ಸುಲಭದಲ್ಲಿ ಅವಕಾಶ ಮಾಡಿಕೊಡಲಿದ್ದಾರೆ ಎಂದು ಹೇಳುವ ಹಾಗಿಲ್ಲ.
ಆದುದರಿಂದ `ಇಂದು ಅಧಿಸೂಚನೆ ಜಾರಿಯಾಗಿ, ನಾಳೆಯೇ ಮಂಡಳಿ ರಚನೆಯಾಗಿ, ನಾಡಿದ್ದು ಜಲಾಶಯಗಳ ಮೇಲಿನ ಅಧಿಕಾರವನ್ನು ರಾಜ್ಯ ಕಳೆದುಕೊಳ್ಳಲಿದೆ' ಎಂಬ ಆತಂಕಕ್ಕೆ ಯಾವ ಆಧಾರಗಳೂ ಇಲ್ಲ. ಒಂದೊಮ್ಮೆ ಕಾವೇರಿ ನದಿನೀರು ನಿರ್ವಹಣೆಗೆ ಅಂತಹದ್ದೊಂದು ಸ್ವತಂತ್ರ ವ್ಯವಸ್ಥೆ ಅಸ್ತಿತ್ವಕ್ಕೆ ಬಂದರೂ ಹೆದರಬೇಕಾಗಿರುವುದು ಕಾವೇರಿ ನದಿ ನೀರು ಹಂಚಿಕೆಯ ವಿಷಯದಲ್ಲಿ ಬಹುಪಾಲು ಸತ್ಯವನ್ನೇ ಹೇಳುತ್ತಾ ಬಂದಿರುವ ಕರ್ನಾಟಕ ಅಲ್ಲ, ಬಹುಪಾಲು ಸುಳ್ಳುಗಳನ್ನೇ ಹೇಳುತ್ತಾ ಬಂದಿರುವ ತಮಿಳುನಾಡು. ಇತ್ತೀಚೆಗೆ ಸುಪ್ರೀಂಕೋರ್ಟಿನಲ್ಲಿಯೇ ತಮಿಳುನಾಡಿನ ಸುಳ್ಳು ಬಯಲಾಗಿದೆ. ಆದುದರಿಂದ ಅಧಿಸೂಚನೆಯ ಪ್ರಕಟಣೆ ಎಂದಾಕ್ಷಣ ಅದು ಬದುಕಿನ ಕೊನೆ ಎಂದು ಭೀತಿಪಡಬೇಕಾಗಿಲ್ಲ, ಅದರಾಚೆಗೂ ಬದುಕಿದೆ.

Sunday, February 10, 2013

ಅಫ್ಜಲ್ ಗುರು ಸತ್ತರೂ, ಸಾಯದಿರುವ ಪ್ರಶ್ನೆಗಳು

ಮ್ಮ ಸಂಸದರ ಅಮೂಲ್ಯ ಪ್ರಾಣ ಮತ್ತು ದೇಶದ ಮಾನವನ್ನು ಭಯೋತ್ಪಾದಕರ ದಾಳಿಯಿಂದ ರಕ್ಷಿಸಲು ಹೋಗಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡ ಸಂಸತ್ ಮೇಲಿನ ದಾಳಿ ಪ್ರಕರಣದ ಪ್ರಮುಖ ಆರೋಪಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಾಗಿದೆ. ಕೊನೆಗೂ ಅಪರಾಧಿಯೊಬ್ಬನಿಗೆ ಶಿಕ್ಷೆಯಾಯಿತಲ್ಲ ಎಂದು ದೇಶದ ಸಾಮಾನ್ಯ ಜನತೆ ನಿಟ್ಟುಸಿರುಬಿಟ್ಟರೆ, ಒಂದಷ್ಟು ಅತ್ಯುಗ್ರ ದೇಶಾಭಿಮಾನಿಗಳು ಬೀದಿಗಿಳಿದು ಹಬ್ಬ ಆಚರಿಸುವ ರೀತಿಯಲ್ಲಿ ಸಂಭ್ರಮಿಸಿದ್ದಾರೆ.
ಇದರೊಂದಿಗೆ `ಸಂಸತ್‌ಮೇಲೆ ದಾಳಿ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ, ನಿಜವಾದ ಅಪರಾಧಿಗಳೆಲ್ಲರಿಗೂ ಶಿಕ್ಷೆಯಾಗಿದೆ' ಎಂದು ಸಮಾಧಾನ ಪಟ್ಟುಕೊಳ್ಳಬಹುದೇ?
ಸಂಸತ್‌ಭವನದ ಮೇಲೆ ಭಯೋತ್ಪಾದಕರ ದಾಳಿ ನಡೆದ ಎರಡೇ ದಿನಗಳಲ್ಲಿ ಕಿಕ್ಕಿರಿದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ದೆಹಲಿ ಪೊಲೀಸರ ವಿಶೇಷ ದಳ ಈ ದುಷ್ಕೃತ್ಯಕ್ಕೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೋಯಬಾ ಮತ್ತು ಜೈಷ್-ಎ-ಮೊಹಮ್ಮದ್ ಎಂಬ ಎರಡು ಉಗ್ರಗಾಮಿ ಸಂಘಟನೆಗಳು ಕಾರಣ ಎಂದು ಘೋಷಿಸಿತ್ತು. ಆರೋಪಿಗಳನ್ನೆಲ್ಲ ಪತ್ತೆಹಚ್ಚಿದ್ದಾಗಿ ಹೇಳಿದ್ದ ಪೊಲೀಸರು ಹನ್ನೆರಡು ಆರೋಪಿಗಳ ಪಟ್ಟಿಯನ್ನೂ ನೀಡಿದ್ದರು.
ಎಲ್‌ಇಟಿಗೆ ಸೇರಿದ ಘಾಜಿ ಬಾಬಾ ಮತ್ತು ಮೌಲಾನ ಮಸೂದ್ ಅಜರ್, ತಾರೀಖ್ ಮಹಮ್ಮದ್, ಮೃತರಾದ ಐವರು ದಾಳಿಕೋರರು, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎ.ಆರ್.ಗಿಲಾನಿ, ಅಫ್ಜಲ್‌ಗುರು,  ಶೌಕತ್‌ಹುಸೇನ್ ಗುರು ಮತ್ತು ಪತ್ನಿ ಅಫ್ಸನ್‌ಗುರುವಿನ ಹೆಸರು ಆ ಪಟ್ಟಿಯಲ್ಲಿತ್ತು. ಈ ಹನ್ನೆರಡು ಆರೋಪಿಗಳಲ್ಲಿ ಆ ಕ್ಷಣದಲ್ಲಿ ಜೀವಂತವಾಗಿದ್ದವರು ಏಳು ಮಂದಿ ಮಾತ್ರ.
ಕೆಲವು ವರ್ಷಗಳ ನಂತರ ಘಾಜಿಬಾಬಾ ಕೂಡಾ ಎಲ್ಲೋ ಭದ್ರತಾಪಡೆಯ ಗುಂಡಿಗೆ ಬಲಿಯಾಗಿದ್ದ. ಮಸೂದ್ ಅಜರ್ ಪಾಕಿಸ್ತಾನದಲ್ಲಿ ನಿಶ್ಚಿಂತೆಯಾಗಿ ಸಾವಿನ ವ್ಯಾಪಾರವನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ಗಿಲಾನಿ ಮತ್ತು ಅಫ್ಸನ್‌ಗುರುವನ್ನು ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿತ್ತು. ಶೌಕತ್‌ಗುರುವಿಗೆ ಹೈಕೋರ್ಟ್ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್ ಹತ್ತುವರ್ಷಗಳ ಜೈಲು ಶಿಕ್ಷೆಯಾಗಿ ಪರಿವರ್ತಿಸಿದ್ದರಿಂದ ಬಿಡುಗಡೆಗೊಂಡಿದ್ದಾನೆ. ಕೊನೆಗೂ ಗಲ್ಲಿಗೇರಿದ್ದು ಅಫ್ಜಲ್‌ಗುರು ಒಬ್ಬನೇ.
ಸಂಸತ್ ಮೇಲಿನ ದಾಳಿಯಲ್ಲಿ ಎಲ್‌ಎಟಿ ಇಲ್ಲವೇ ಜೆಎಎಂ ಪಾತ್ರ ಏನೆಂದು ಹೇಳಲು ಕಳೆದ ಹನ್ನೆರಡು ವರ್ಷಗಳಲ್ಲಿ ಪೊಲೀಸರಿಗೆ ಸಾಧ್ಯವಾಗಿಲ್ಲ. ಇಡೀ ಪ್ರಕರಣದಲ್ಲಿ ನಿಗೂಢ ರೀತಿಯಲ್ಲಿ (ಮಾಧ್ಯಮಗಳು ಸೇರಿದಂತೆ) ಎಲ್ಲರ ಕಣ್ಣುಗಳಿಂದಲೂ ತಪ್ಪಿಸಿಕೊಂಡಿರುವ ತಾರೀಖ್ ಮೊಹಮ್ಮದ್ ಎಂಬ ಆರೋಪಿಯನ್ನು ಬಂಧಿಸಲೂ ಅವರಿಂದ ಆಗಿಲ್ಲ.
ಭಾರತ ಮತ್ತು ಪಾಕಿಸ್ತಾನದ ನಡುವೆ ಅಣುಸಮರ ನಡೆದೇ ಬಿಟ್ಟಿತು ಎನ್ನುವಷ್ಟು ಗಂಭೀರರೂಪ ಪಡೆದಿದ್ದ ಘಟನೆ ಇದು. ಪಾಕಿಸ್ತಾನದ ಕೈವಾಡದ ಬಗ್ಗೆ `ವಿವಾದಾತೀತ ಪುರಾವೆ' ಇದೆ ಎಂದು ಸಂಸತ್‌ನಲ್ಲಿಯೇ ಘೋಷಿಸಿ, ಆ ದೇಶದ ಮೇಲೆ ಯುದ್ಧವನ್ನೆ ಸಾರುವಂತೆ ಸೇನೆಯನ್ನು ಗಡಿಯಲ್ಲಿ ಕೊಂಡೊಯ್ದು ನಿಲ್ಲಿಸಿದ್ದ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರಿಂದ ಹಿಡಿದು ಈಗಿನ ಪ್ರಧಾನಿ ಮನಮೋಹನ್‌ಸಿಂಗ್ ವರೆಗೂ ಈವರೆಗೂ ದಾಳಿಯಲ್ಲಿ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳು ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಆಗಲಿಲ್ಲ.
ದಾಳಿ ನಡೆದ ನಂತರ ಅಫ್ಜಲ್‌ಗುರುವಿಗಿಂತ ಮೊದಲೇ ಬಂಧಿಸಿದ್ದ ಎಸ್.ಎ.ಆರ್.ಗಿಲಾನಿ ವಿರುದ್ಧದ ಆರೋಪವನ್ನು ಕೂಡಾ ಸಾಬೀತುಪಡಿಸಲು ಪೊಲೀಸರಿಂದ ಸಾಧ್ಯ ಆಗಿಲ್ಲ. ಉಳಿದವರೆಲ್ಲರೂ ಪೊಲೀಸರಿಂದ ತಪ್ಪಿಸಿಕೊಂಡರೂ ಅಫ್ಜಲ್‌ಗುರು ಮಾತ್ರ ಯಾಕೆ ಸಿಕ್ಕಿಹಾಕಿಕೊಂಡ?
ಸಾಮಾನ್ಯವಾಗಿ ಆರೋಪಿಯೊಬ್ಬ ತನಗೆ ವಕೀಲರ ಅವಶ್ಯಕತೆ ಇಲ್ಲ ಎಂದು ಹೇಳಿದರೂ ಕೂಡಾ ನ್ಯಾಯಾಲಯ ಆತನ ಪರ ವಾದಿಸಲು ವಕೀಲರನ್ನು ನೇಮಿಸುತ್ತದೆ. ಆದರೆ  ಅಫ್ಜಲ್‌ಗುರುವಿನ ಬಗ್ಗೆ ಮಾತ್ರ ನ್ಯಾಯಾಲಯ ಅಂತಹ ದಯೆಯನ್ನು ತೋರಲಿಲ್ಲ ಎನ್ನುವುದು ಅಚ್ಚರಿ ಹುಟ್ಟಿಸುತ್ತದೆ. ಎಸ್.ಎ.ಆರ್ ಗಿಲಾನಿ ಪರ ಹೈಕೋರ್ಟ್‌ನಲ್ಲಿ ರಾಮ್‌ಜೇಠ್ಮಲಾನಿಯಂತಹ ಖ್ಯಾತ ವಕೀಲರೇ ವಾದ ಮಂಡಿಸಿ ಅವರ ಬಿಡುಗಡೆಗೆ ಕಾರಣರಾಗಿದ್ದರು. ಆದರೆ ಆರೋಪಪಟ್ಟಿ ಸಲ್ಲಿಸಿದ ದಿನದಿಂದ 2005ರ ಮೇ 14ರವರೆಗೆ  ಸುಮಾರು ನಾಲ್ಕು ವರ್ಷ ಸಂಸತ್‌ದಾಳಿಯ ಸಂಚಿನ ಪ್ರಮುಖ ಪಾತ್ರಧಾರಿ ಎಂದು ಹೇಳಲಾಗಿದ್ದ ಅಫ್ಜಲ್‌ಗುರುವನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಲು ಯಾವ ವಕೀಲರೂ ಇರಲಿಲ್ಲ.
ಕೊನೆಗೆ ನ್ಯಾಯಾಲಯ ವಕೀಲರೊಬ್ಬರನ್ನು ನೇಮಿಸಿದರೂ ಅವರು ಹಾಜರಾಗಲೇ ಇಲ್ಲ. ಅದರ ನಂತರ ಮತ್ತೊಬ್ಬರನ್ನು ನೇಮಿಸಲಾಯಿತು. ಅವರು ಅಫ್ಜಲ್ ಒಪ್ಪಿಕೊಳ್ಳಲು ನಿರಾಕರಿಸುತ್ತಿದ್ದ ವಿಚಾರಗಳನ್ನೆಲ್ಲ ನ್ಯಾಯಾಲಯದಲ್ಲಿ ಒಪ್ಪಿಕೊಂಡುಬಿಟ್ಟರು. ಕೊನೆಗೆ ಏನೋ ಕಾರಣ ನೀಡಿ ಅವರು ಅಫ್ಜಲ್ ವಕಾಲತ್ತಿನಿಂದ ಬಿಡುಗಡೆಗೊಳಿಸಬೇಕೆಂದು ಕೋರಿದರು.
ಈ ನಡುವೆ ಅಫ್ಜಲ್ ಸೂಚಿಸಿದ್ದ ನಾಲ್ವರು ವಕೀಲರು ಒಪ್ಪಿಕೊಳ್ಳಲಿಲ್ಲ. ಕೊನೆಗೆ ನೀರಜ್ ಬನ್ಸಾಲ್ ಎಂಬವರನ್ನು ನ್ಯಾಯಾಲಯ ಅಮಿಕಸ್ ಕ್ಯುರಿಯೇ (ನ್ಯಾಯಾಲಯದ ಮಿತ್ರ) ಆಗಿ ನೇಮಿಸಿತು. ಆದರೆ ಈ `ಮಿತ್ರ' ಅಫ್ಜಲ್‌ನಿಂದ ಯಾವ ಮಾಹಿತಿಯನ್ನು ಪಡೆಯುವ ಪ್ರಯತ್ನ ಮಾಡಲಿಲ್ಲ. ಆತನ ವಿರುದ್ಧ ಪ್ರಾಸಿಕ್ಯೂಶನ್ ಹಾಜರುಪಡಿಸಿದ್ದ ಸಾಕ್ಷಿಗಳನ್ನು ಪಾಟಿಸವಾಲು ನಡೆಸಲಿಲ್ಲ. ಈ ವಕೀಲರ ಮೇಲೆ ತನಗೆ ವಿಶ್ವಾಸ ಇಲ್ಲ ಎಂದು ಅಫ್ಜಲ್ ನ್ಯಾಯಾಲಯದಲ್ಲಿಯೇ ಹೇಳಿದ್ದ.
ಅಫ್ಜಲ್‌ಗುರುವಿಗೆ ಪ್ರಾರಂಭದಲ್ಲಿಯೇ ನುರಿತ ವಕೀಲರೊಬ್ಬರ ನೆರವು ಸಿಕ್ಕಿದ್ದರೆ ಇಡೀ ಪ್ರಕರಣ ಬೇರೆ ತಿರುವು ಪಡೆಯುತ್ತಿತ್ತೆ? ಘಟನೆಯ ಬಗ್ಗೆ ಆತ ನೀಡಿದ್ದ ಅನೇಕ ಪ್ರಮುಖ ಸುಳಿವುಗಳ ಜಾಡುಹಿಡಿದು ಪೊಲೀಸರು ಘಟನೆಯ ಆಳಕ್ಕೆ ಹೋಗಿದ್ದರೆ ಸಂಸತ್‌ಮೇಲಿನ ದಾಳಿಯ ಸಂಚಿನಲ್ಲಿ ಶಾಮೀಲಾಗಿದ್ದ ಇನ್ನಷ್ಟು ವ್ಯಕ್ತಿಗಳ ಪಾತ್ರ ಬಯಲಾಗುತ್ತಿತ್ತೇ? ಹೀಗೆ ಮಾಡದ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸುವ ಅವಸರದಲ್ಲಿದ್ದರೇ? ಇಲ್ಲವೆ ಯಾರನ್ನೋ ರಕ್ಷಿಸುವ ಒತ್ತಡದಲ್ಲಿ ಅವರು ಸಿಕ್ಕಿ ಹಾಕಿಕೊಂಡಿದ್ದರೇ?  ಅಫ್ಜಲ್‌ಗುರು ತಿಹಾರ್ ಜೈಲಿನಲ್ಲಿ ಮಣ್ಣಾಗಿಹೋಗಿದ್ದರೂ ಇಂತಹ ಅನೇಕ ಪ್ರಶ್ನೆಗಳನ್ನು ಬಿಟ್ಟುಹೋಗಿದ್ದಾನೆ.
ಎಂಬತ್ತರ ದಶಕದ ಕೊನೆಭಾಗದಲ್ಲಿ ಕಾಶ್ಮೆರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದಾಗಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದ ನೂರಾರು ಯುವರಕಲ್ಲಿ ಒಬ್ಬ ಅಫ್ಜಲ್‌ಗುರು. 1989ರಲ್ಲಿ ಉಗ್ರಗಾಮಿ ತರಬೇತಿ ಪಡೆಯಲು ಪಾಕಿಸ್ತಾನ ಆಕ್ರಮಿತ ಕಾಶ್ಮೆರಕ್ಕೆ ಹೋಗಿದ್ದ ಈತ ಬಹಳ ಬೇಗ ಭ್ರಮನಿರಸನಗೊಂಡು ವಾಪಸು ಬಂದಿದ್ದ. ಅದರ ನಂತರ ಸ್ವಇಚ್ಛೆಯಿಂದ ಗಡಿ ಭದ್ರತಾ ಪಡೆಯ ಮುಂದೆ ಶರಣಾಗತನಾಗಿದ್ದ. ಅಂದಿನಿಂದ ಸತತವಾಗಿ ಈತ ಕಾಶ್ಮೆರದ `ವಿಶೇಷ ಪೊಲೀಸ್ ದಳ'ದ (ಎಸ್‌ಟಿಎಫ್) ಕಣ್ಗಾವಲಿನಲ್ಲಿದ್ದ. ಆಗಾಗ ಎಸ್‌ಟಿಎಫ್ ಅಫ್ಜಲ್‌ನನ್ನು ತನ್ನಲ್ಲಿಗೆ ಕರೆಸಿಕೊಂಡು ಮಾಹಿತಿಗಾಗಿ ಪೀಡಿಸುತ್ತಿತ್ತು.
ಈ ರೀತಿ ಎಸ್‌ಟಿಎಫ್ ನಿಗಾ ಇಟ್ಟಿರುವ ವ್ಯಕ್ತಿಯೊಬ್ಬನನ್ನು ಯಾವುದೇ ಉಗ್ರಗಾಮಿ ಸಂಘಟನೆ ತನ್ನ ಪ್ರಮುಖ  ಕಾರ್ಯಾಚರಣೆಯಲ್ಲಿ ಯಾವ ಧೈರ್ಯದಿಂದ ಬಳಸಿಕೊಳ್ಳಲು ಸಾಧ್ಯ? ಅಂತಹ ಧೈರ್ಯವನ್ನು ಅದು ತೋರಿದರೂ ಈ ಬೆಳವಣಿಗೆಗಳು ಎಸ್‌ಟಿಎಫ್ ಗಮನಕ್ಕೆ ಯಾಕೆ ಬರಲಿಲ್ಲ?
ಅಫ್ಜಲ್‌ಗುರು ತನ್ನ ತಪ್ಪೊಪ್ಪಿಗೆಯಲ್ಲಿ ಕಾಶ್ಮೆರದ ಎಸ್‌ಟಿಎಫ್ ಪಾತ್ರವನ್ನು ವಿವರವಾಗಿ ದಾಖಲಿಸಿದ್ದ. ದಾಳಿಯ ವೇಳೆ ಭದ್ರತಾಪಡೆಯ ಗುಂಡಿಗೆ ಬಲಿಯಾಗಿದ್ದ ಮೊಹಮ್ಮದ್ ಎಂಬ ಭಯೋತ್ಪಾದಕನ ಜತೆಗಿನ ಸಂಬಂಧವನ್ನು ನಿರಾಕರಿಸಿರಲಿಲ್ಲ. ಅದರ ಜತೆಯಲ್ಲಿ ಮೊಹಮ್ಮದ್ ಹೇಗೆ ಪರಿಚಯವಾದ ಎನ್ನುವುದನ್ನು ಕೂಡಾ ಹೇಳಿದ್ದ. ಇಲ್ಲಿಯೇ ತಾರೀಖ್ ಮತ್ತು ಎಸ್‌ಟಿಎಫ್ ಡಿವೈಎಸ್‌ಪಿ ದ್ರಾವಿಂದರ್ ಸಿಂಗ್ ಎಂಬ ಇಬ್ಬರು  ನಿಗೂಢ ವ್ಯಕ್ತಿಗಳು ಕಾಣಿಸಿಕೊಳ್ಳುವುದು.
ತಾರೀಖ್‌ನನ್ನು ಆರೋಪಿಯೆಂದು ಪೊಲೀಸರು ಗುರುತಿಸಿದ್ದರೂ ಘಟನೆ ನಡೆದ ದಿನದಿಂದ ಇಲ್ಲಿಯ ವರೆಗೆ ಆತನ ಪತ್ತೆಯಾಗಿಲ್ಲ. ಮೊಹಮ್ಮದ್‌ನ ಹಿನ್ನೆಲೆ ಬಯಲಿಗೆ ಬಂದಿಲ್ಲ, ದ್ರಾವಿಂದರ್ ಸಿಂಗ್ ಬಗ್ಗೆ ಕನಿಷ್ಠ ವಿಚಾರಣೆ ಕೂಡಾ ನಡೆದಿಲ್ಲ.
`ತಾರೀಖ್‌ನ ಮೂಲಕ ನನಗೆ ಮೊಹಮ್ಮದ್ ಪರಿಚಯವಾಗಿತ್ತು.  ಎಸ್‌ಟಿಎಫ್‌ಗೆ ಕೆಲಸ ಮಾಡುತ್ತಿದ್ದನೆಂದು ಹೇಳುತ್ತಿದ್ದ ತಾರೀಖ್ ಜತೆಯಲ್ಲಿಯೇ ನಾನು ಡಿವೈಎಸ್‌ಪಿ ದ್ರಾವಿಂದರ್ ಸಿಂಗ್ ಅವರನ್ನು ಭೇಟಿಯಾಗಿದ್ದೆ. ಮೊಹಮ್ಮದ್‌ನನ್ನು ದೆಹಲಿಗೆ ಕರೆದೊಯ್ಯುವಂತೆ ಅವರೇ ನನ್ನನ್ನು ಒತ್ತಾಯಿಸಿದ್ದು. ಎಸ್‌ಟಿಎಫ್ ಆದೇಶವನ್ನು ನಾನು ಮೀರುವುದು ಸಾಧ್ಯ ಇರಲಿಲ್ಲವಾದ ಕಾರಣ ಮೊಹಮ್ಮದನನ್ನು ಕರೆದುಕೊಂಡು ಬಂದೆ.
ದಾಳಿಯಲ್ಲಿ ಉಪಯೋಗಿಸಲಾಗಿದ್ದ ಅಂಬಾಸಿಡರ್ ಕಾರು ಖರೀದಿ ಮಾಡಲು ಕೂಡಾ ನಾನು ಸಹಾಯ ಮಾಡಿದ್ದೆ. ಆದರೆ ಆತ ಭಯೋತ್ಪಾದಕನೆಂದು ನನಗೆ ಗೊತ್ತಿರಲಿಲ್ಲ. ತಾರೀಖ್ ಮತ್ತು ದ್ರಾವಿಂದರ್ ಸಿಂಗ್ ನೀಡಿದ್ದ ಆದೇಶಗಳನ್ನಷ್ಟೇ ನಾನು ಪಾಲಿಸಿದ್ದೇನೆ. ನನ್ನ ಹೇಳಿಕೆಯನ್ನು ನಂಬುವುದಿಲ್ಲವಾದರೆ ದಯವಿಟ್ಟು ನನ್ನ ಮತ್ತು ಮೊಹಮ್ಮದ್‌ನ ಸೆಲ್‌ಪೋನ್‌ಗಳಿಗೆ ತಾರೀಖ್ ಮತ್ತು ದ್ರಾವಿಂದರ್‌ಸಿಂಗ್ ಮಾಡಿದ್ದ ಫೋನ್ ಕರೆಗಳ ವಿವರಗಳನ್ನಾದರೂ ಪರಿಶೀಲಿಸಿ' ಎಂದು ಅಫ್ಜಲ್‌ಗುರು ನ್ಯಾಯಾಲಯದ ಮುಂದೆ (ಪೊಲೀಸರ ಮುಂದೆ ಅಲ್ಲ) ನೀಡಿದ್ದ ತಪ್ಪೊಪ್ಪಿಗೆಯಲ್ಲಿ ತಿಳಿಸಿದ್ದ. ಟಿವಿ ಚಾನೆಲ್‌ಗಳ ಮುಂದೆ ಹಾಜರಾಗಿದ್ದ ದ್ರಾವಿಂದರ್‌ಸಿಂಗ್ ತಾನು ಅಫ್ಜಲ್‌ನನ್ನು ಬಂಧಿಸಿದ್ದು ಮತ್ತು ಚಿತ್ರಹಿಂಸೆ ನೀಡಿದ್ದನ್ನು ಒಪ್ಪಿಕೊಂಡಿದ್ದರು.
ಅಫ್ಜಲ್‌ಗುರು ಹೇಳಿಕೆಯ ಸತ್ಯಾಸತ್ಯತೆಗಳೇನೇ ಇದ್ದರೂ ಪೊಲೀಸರು ತಾರೀಖ್ ಮತ್ತು ಪೊಲೀಸ್ ಅಧಿಕಾರಿ ದ್ರಾವಿಂದರ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಬಹುದಿತ್ತು. ಇಷ್ಟು ಮಾತ್ರ ಅಲ್ಲ ದಾಳಿಯ ಸಂಚಿನಲ್ಲಿ ಅಫ್ಜಲ್‌ನನ್ನು ಜೋಡಿಸಿದ್ದ ಮೊಹಮ್ಮದ್ ಎಂಬ ಭಯೋತ್ಪಾದಕನ ಬಗ್ಗೆಯೂ ಪೊಲೀಸರು ಯಾಕೋ ಆಳಕ್ಕೆ ಇಳಿದು ತನಿಖೆ ನಡೆಸಿಲ್ಲ. ದಾಳಿ ನಡೆದ ನಂತರ ಈ ಭಯೋತ್ಪಾದಕನ ಭಾವಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದನ್ನು ಕಂಡ ಮಹಾರಾಷ್ಟ್ರದ ಥಾಣೆಯ ಪೊಲೀಸ್ ಕಮಿಷನರ್ ಎಸ್.ಎಂ.ಶಾಂಗಾರಿ ಅವರು `ಮೃತ ಭಯೋತ್ಪಾದಕ ಮೊಹಮ್ಮದ್ ಅಲಿಯಾಸ್ ಅಬು ಹಮ್ಜಾ  ಎಂಬಾತ ಲಷ್ಕರ್-ಎ-ತೊಯ್ಬಾಗೆ ಸೇರಿರುವ ಉಗ್ರನಾಗಿದ್ದು ಆತನನ್ನು 2000ನೇ ವರ್ಷದಲ್ಲಿ  ಬಂಧಿಸಿ ಜಮ್ಮು ಮತ್ತು ಕಾಶ್ಮೆರದ ಪೊಲೀಸರ ವಶಕ್ಕೆ ಒಪ್ಪಿಸಿದ್ದಾಗಿ ಹೇಳಿದ್ದರು.
ಇದು ನಿಜವೇ ಆಗಿದ್ದರೆ ಪೊಲೀಸರ ವಶದಲ್ಲಿದ್ದ ಈತ ಹೇಗೆ ದಾಳಿಯಲ್ಲಿ ಭಾಗಿಯಾಗಿದ್ದ? ದಾಳಿಯಲ್ಲಿ ಭಾಗಿಯಾಗದೆ ಇದ್ದಿದ್ದರೆ ಬಂಧಿತ ಮೊಹಮ್ಮದ್ ಈಗ ಎಲ್ಲಿದ್ದಾನೆ?' ಈ ಪ್ರಶ್ನೆಗೂ ಪೊಲೀಸರ ತನಿಖೆಯಲ್ಲಿ ಉತ್ತರ ಸಿಗುವುದಿಲ್ಲ.
ಸಂಸತ್‌ನ ಮೇಲೆ ದಾಳಿ ನಡೆಸುವ ಭಯೋತ್ಪಾದಕರ ಕೃತ್ಯದ ಬಗ್ಗೆ ಗೊತ್ತಿದ್ದರೂ ಮೌನವಾಗಿರುವ ಅಪರಾಧವನ್ನು ಅಫ್ಜಲ್‌ಗುರು ಮಾಡಿರಬಹುದು. ಇದು ಗಲ್ಲು ಶಿಕ್ಷೆಗೆ ಅರ್ಹವಾದ `ದೇಶದ ವಿರುದ್ಧ ಯುದ್ಧ ಸಾರಿರುವ ವಿದ್ರೋಹ'ವಾಗಿರಬಹುದು. ಆದರೆ ಇಂತಹ ಮಹಾ ಅಪರಾಧದ ತನಿಖೆ ಅದರ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಲು ಸಾಧ್ಯ ಇರುವಷ್ಟು ದುರ್ಬಲವಾಗಿರಬಾರದಿತ್ತು. ಇಲ್ಲಿಯವರೆಗೆ ಗಲ್ಲಿಗೇರಿಸಲಾದ ಯಾವ ಅಪರಾಧಿಯ ಬಗ್ಗೆ ನಡೆದ ತನಿಖೆ ಕೂಡಾ ಇಷ್ಟೊಂದು ವಿವಾದವನ್ನು ಹುಟ್ಟುಹಾಕಿರಲಿಲ್ಲ.
ವಿಚಿತ್ರವೆಂದರೆ ಸುಪ್ರೀಂಕೋರ್ಟ್ ಕೂಡಾ ತನ್ನ ತೀರ್ಪಿನಲ್ಲಿ `ಅಫ್ಜಲ್‌ಗುರು ಸಂಸತ್‌ಭವನದ ಮೇಲಿನ ದಾಳಿಯ ಸಂಚನ್ನು ರೂಪಿಸಿಲ್ಲ ಮತ್ತು ಅದರ ಅನುಷ್ಠಾನದಲ್ಲಿ ಪಾಲ್ಗೊಂಡಿಲ್ಲ' ಎನ್ನುವುದನ್ನು ಒಪ್ಪಿಕೊಂಡಿದೆ. ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿಯೇ ಅದು ಅಫ್ಜಲ್‌ಗುರು ಅಪರಾಧಿ ಎಂದು ಹೇಳಿದೆ. `ಈ ಸಂಚಿಗೆ ಸಂಬಂಧಿಸಿದ ಸ್ಪಷ್ಟ ಮತ್ತು ನೇರ ಸಾಕ್ಷ್ಯಗಳಿಲ್ಲ.
ಹೀಗಿದ್ದರೂ ಸಂದರ್ಭ ಮತ್ತು ಪರಿಸ್ಥಿತಿ ಉಗ್ರಗಾಮಿಗಳೊಂದಿಗೆ ಆರೋಪಿ ಅಫ್ಜಲ್‌ನ ಸಹಭಾಗಿತ್ವ ಇತ್ತು ಎನ್ನುವುದನ್ನು ನಿಸ್ಸಂದೇಹವಾಗಿ ಸೂಚಿಸುತ್ತದೆ' ಎನ್ನುವ ಸುಪ್ರೀಂಕೋರ್ಟ್ ತೀರ್ಪು ಈಗಾಗಲೇ ಕೇಳಲಾಗುತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ, ಬದಲಿಗೆ ಇನ್ನಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

Sunday, February 3, 2013

ಆಶಿಶ್ ನಂದಿ ಮಾತುಗಳಲ್ಲಿನ ಸತ್ಯವನ್ನು ಹುಡುಕುತ್ತಾ..

ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಸಾಮಾಜಿಕ ಚಿಂತಕ ಆಶಿಶ್ ನಂದಿ ಆಡಿದ್ದ ಮಾತುಗಳು ವಿವಾದಕ್ಕೀಡಾಗಿ ಭಿನ್ನ ರೂಪ, ಬಣ್ಣ, ವಾಸನೆಗಳನ್ನು ಪಡೆಯತೊಡಗಿವೆ. `ಅವರ ಮಾತುಗಳಲ್ಲಿನ ಆಯ್ದಭಾಗಗಳನ್ನಷ್ಟೆ ಹೆಕ್ಕಿ ತೆಗೆದು ಮುದ್ರಿಸಿದ ಮತ್ತು ಪ್ರಸಾರ ಮಾಡಿದ ಮಾಧ್ಯಮಗಳು ಕೂಡಾ ವಿವಾದಕ್ಕೆ ಕಾರಣ' ಎಂಬ ಆರೋಪ ಕೂಡಾ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಆ ದಿನ ನಡೆದ `ಆಲೋಚನೆಗಳ ಪ್ರಜಾಪ್ರಭುತ್ವ' ಎಂಬ ವಿಷಯದ ಮೇಲಿನ ಚರ್ಚೆಯಲ್ಲಿ ಆಶಿಶ್ ನಂದಿ ಮತ್ತು ಅವರ ಪ್ರತಿಕ್ರಿಯೆಗೆ ಸ್ಪೂರ್ತಿ ನೀಡಿತ್ತೆಂದು ಹೇಳಲಾದ ಪತ್ರಕರ್ತ ತರುಣ್ ತೇಜಪಾಲ್ ಅವರಾಡಿದ್ದ ಮಾತುಗಳೇನೆಂಬುದನ್ನು ತಿಳಿದುಕೊಳ್ಳಬೇಕಾಗಿದೆ. ಇದಕ್ಕಾಗಿ ಚರ್ಚೆಯ ಕೊನೆಯಲ್ಲಿ ಇಬ್ಬರೂ ಆಡಿದ್ದ ಮಾತುಗಳ ಪೂರ್ಣ ಪಾಠ ಇಲ್ಲಿ ನೀಡಲಾಗಿದೆ:
ತರುಣ್ ತೇಜ್‌ಪಾಲ್: `..... ಭಾರತದಂತಹ ದೇಶದಲ್ಲಿ ಭ್ರಷ್ಟಾಚಾರ ಎನ್ನುವುದು ವರ್ಗ ಸಮಾನತೆಯ ಒಂದು ಸಾಧನ. ನನ್ನ ಮನೆಯ ಚಾಲಕ ಇಲ್ಲವೆ ಅಡಿಗೆಯವ ನಾನು ಪ್ರತಿನಿಧಿಸುವ ವರ್ಗದ ಮಕ್ಕಳ ಜತೆಯಲ್ಲಿಯೇ ಶಾಲೆಗೆ ಹೋಗಿ ಕಲಿಯುವಂತಹ ರೀತಿಯಲ್ಲಿ ನಾವು ದೇಶವನ್ನು ಕಟ್ಟಿಲ್ಲ. `ಎಲೀಟ್' ಮತ್ತು `ಪ್ರಿವಿಲೆಜ್ಡ್' ವರ್ಗಕ್ಕೆ ಸೇರಿದ್ದ ನಮ್ಮಂತಹವರು ತಮಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ರೂಪಿಸಿಕೊಂಡಿದ್ದೇವೆ. ಆದರೆ ಇನ್ನೊಂದು ಬದಿಯಲ್ಲಿರುವ ನೂರು ಕೋಟಿ ಜನವರ್ಗಕ್ಕೆ ಈ ನಿಯಮಗಳ ಮೂಲಕ ಭ್ರಷ್ಟ ವ್ಯವಸ್ಥೆಯಲ್ಲಿನ ಪಾಲನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಅವರು ಆ ನಿಯಮಗಳನ್ನೇ ಮುರಿಯತೊಡಗಿದ್ದಾರೆ.'
ಆಶಿಶ್ ನಂದಿ :` ಈ ಕತೆಯ ಬಹುಮುಖ್ಯ ಭಾಗವನ್ನು ಅವರು (ತೇಜ್‌ಪಾಲ್) ಹೇಳಲಿಲ್ಲ. ಅದನ್ನು ಕೇಳಿದರೆ ಆಘಾತವಾದೀತು. ಅದು ಘನತೆಗೆ ತಕ್ಕುದ್ದಲ್ಲ ಎಂದೂ ಅನಿಸಬಹುದು. ನನ್ನ ಮಟ್ಟಿಗೆ ಇದೊಂದು ಅಶ್ಲೀಲ ಹೇಳಿಕೆ. ಆದರೆ ಅತಿ ಹೆಚ್ಚಿನ ಸಂಖ್ಯೆಯ ಭ್ರಷ್ಟರು ಹಿಂದುಳಿದ ಜಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಎಲ್ಲಿಯವರೆಗೆ ಈ ಪರಿಸ್ಥಿತಿ ಮುಂದುವರಿಯುತ್ತದೋ ಅಲ್ಲಿಯವರೆಗೆ ಭಾರತದ ಪ್ರಜಾಪ್ರಭುತ್ವ ಸುರಕ್ಷಿತವಾಗಿರುತ್ತದೆ. ನಾನೊಂದು ಉದಾಹರಣೆ ಕೊಡುತ್ತೇನೆ. ಸಿಪಿಎಂ ಅಧಿಕಾರದಲ್ಲಿರುವವರೆಗೆ ಭಾರತದ ಅತ್ಯಂತ ಕಡಿಮೆ ಭ್ರಷ್ಟತೆಯ ರಾಜ್ಯ ಪಶ್ಚಿಮ ಬಂಗಾಳವಾಗಿತ್ತು. ಕಳೆದ 100 ವರ್ಷಗಳಲ್ಲಿ ಹಿಂದುಳಿದ ಜಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಯಾರೂ ಅಧಿಕಾರಕ್ಕೆ ಬಂದಿಲ್ಲ ಎಂಬುದನ್ನೂ ನಾನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಆದುದರಿಂದಲೇ ಅದೊಂದು ಸ್ವಚ್ಛ ರಾಜ್ಯ'
ತರುಣ್ ತೇಜಪಾಲ್ ಮಂಡಿಸಿದ್ದು ವರ್ಗ ಸಂಘರ್ಷದ ಒಂದು ಚರ್ವಿತಚರ್ವಣ ಥಿಯರಿ.  ಅವರು ಮಾತನಾಡಿದ್ದು `ವರ್ಗ'ಗಳ ಬಗ್ಗೆ. ಅವರೆಲ್ಲಿಯೂ `ಜಾತಿ'ಯ ಪ್ರಸ್ತಾವ ಮಾಡಿರಲಿಲ್ಲ.. ಈಗಿನ ಭ್ರಷ್ಟಾಚಾರ ಕೂಡಾ `ವರ್ಗ ಸಮಾನತೆಯ ಸಾಧನ' ಆಗುತ್ತಿದೆ ಎಂದು ಅವರು ಹೇಳಿದ್ದರೇ ಹೊರತು `ಜಾತಿ ಸಮಾನತೆ'ಯ ಸಾಧನವಾಗುತ್ತಿದೆ ಎಂದು ಹೇಳಿಲ್ಲ. ಭಯೋತ್ಪಾದನೆಯಂತೆ ಭ್ರಷ್ಟಾಚಾರಕ್ಕೂ ಜಾತಿ-ಧರ್ಮಗಳಿಲ್ಲ, ಅದೊಂದು ಪ್ರತ್ಯೇಕ ವರ್ಗ ಎನ್ನುವ ಜನಪ್ರಿಯ ಅಭಿಪ್ರಾಯವನ್ನೇ ಅವರ ಮಾತುಗಳು ಧ್ವನಿಸುತ್ತವೆ. ಆದರೆ ಅದಕ್ಕೆ ಪ್ರತಿಕ್ರಿಯಿಸಿದ್ದ ಆಶಿಶ್‌ನಂದಿ ನೇರವಾಗಿ ಕೈಹಾಕಿದ್ದು ಜಾತಿಮೂಲಕ್ಕೆ. ಅವರು ಭ್ರಷ್ಟಾಚಾರದ ಜತೆ ನಿರ್ದಿಷ್ಟವಾಗಿ ಕೆಲವು ಜಾತಿಗಳನ್ನು ಜೋಡಿಸಿದ್ದರು. ತರುಣ್ ಹೇಳಿದ್ದನ್ನು ಸರಿಯಾಗಿ ಗ್ರಹಿಸಲು ನಂದಿ ಸೋತರೇ ಇಲ್ಲವೇ, ಹೇಳಲೇಬೇಕೆಂದು ಮೊದಲೇ ಸಿದ್ದತೆ ಮಾಡಿಕೊಂಡಿದ್ದ ಅಭಿಪ್ರಾಯವನ್ನು ಮಂಡಿಸಲು ಅವರು ತರುಣ್ ಮಾತುಗಳನ್ನು ಬಳಸಿಕೊಂಡರೇ? ಈ ಪ್ರಶ್ನೆಗಳಿಗೆ ಉತ್ತರ ಏನೇ ಇರಲಿ, ಆಶಿಶ್‌ನಂದಿ ಎಡವಿರುವುದು ಸತ್ಯ. ಒಮ್ಮೆ ಮಾತ್ರ ಎಡವಿದ್ದಲ್ಲ ಅದರ ನಂತರ ನಡೆದ ವಾಗ್ವಾದಗಳಲ್ಲಿ ತನ್ನ ಮಾತುಗಳನ್ನು ಸಮರ್ಥಿಸಿಕೊಳ್ಳುತ್ತಾ, ನಿರಾಕರಿಸುತ್ತಾ, ಸ್ಪಷ್ಟೀಕರಿಸುತ್ತಾ ಮತ್ತೆ ಮತ್ತೆ ಎಡವುತ್ತಿದ್ದಾರೆ.
ತಮ್ಮ ಬರವಣಿಗೆಯಲ್ಲಿನ ಅಪರೂಪದ ಒಳನೋಟಗಳ ಮೂಲಕ ನಮ್ಮಂತಹ ಲಕ್ಷಾಂತರ ಕಿರಿಯ `ಏಕಲವ್ಯ'ರು ವೈಚಾರಿಕ ಸ್ಪಷ್ಟತೆಯನ್ನು ರೂಪಿಸಿಕೊಳ್ಳಲು ನೆರವಾದ `ಗುರು' ಆಶಿಶ್‌ದಾ. (ಕನ್ನಡದ ಬಹುಮುಖ್ಯ ಪ್ರತಿಭೆಯಾಗಿದ್ದ ಡಾ.ಡಿ.ಆರ್.ನಾಗರಾಜ್ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಪ್ರೋತ್ಸಾಹ ನೀಡಿದವರು ಆಶಿಶ್ ನಂದಿ ಎನ್ನುವುದು ಅವರ ಬಗೆಗಿನ ಪ್ರೀತಿ-ಅಭಿಮಾನವನ್ನು ಇಮ್ಮಡಿಗೊಳಿಸುತ್ತದೆ.). ಇಂತಹ ಹಿರಿಯ ಜೀವ ಈ ಇಳಿವಯಸ್ಸಿನಲ್ಲಿ ತನ್ನನ್ನು ಸಮರ್ಥಿಸಿಕೊಳ್ಳಲು ನಡೆಸುತ್ತಿರುವ ಪರದಾಟವನ್ನು ಕಂಡಾಗ ಮನಸ್ಸಿಗೆ ನೋವಾಗುತ್ತದೆ. ಅವರು ಜೈಲು ಶಿಕ್ಷೆ ಅನುಭವಿಸುವಂತಹ ಘೋರ ಅಪರಾಧವನ್ನೇನು ಮಾಡಿಲ್ಲ. ಈಗ ಆಶಿಶ್‌ನಂದಿ ಅವರ ತಲೆಕಡಿಯಲು ಕತ್ತಿಹಿರಿದು ನಿಂತಿರುವ ಜನವರ್ಗದ ಪರವಾಗಿಯೇ ಕಳೆದ 40 ವರ್ಷಗಳಲ್ಲಿ  ಅವರು ಬರೆದದ್ದು ಮತ್ತು ಮಾತನಾಡಿದ್ದು ಎಂಬುದನ್ನು ಅವರನ್ನು ಶಿಕ್ಷಿಸಲು ಹೊರಟಿರುವ ನಾಯಕರು ತಿಳಿದುಕೊಳ್ಳದೆ ಇರುವುದು ನೋವು ಮತ್ತು ವಿಷಾದದ ಸಂಗತಿ.
ಈಗ ನಡೆಯಬೇಕಾಗಿರುವುದು ಆಶಿಶ್‌ನಂದಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯದ ಬಗ್ಗೆ ಮುಕ್ತವಾದ ಚರ್ಚೆ ಮಾತ್ರ. `ಗುರುಭಕ್ತಿ'ಯ ಕಾರಣಕ್ಕಾಗಿ ಅವರಾಡಿದ ಮಾತುಗಳನ್ನು ಬಾಯಿಮುಚ್ಚಿಕೊಂಡು ಒಪ್ಪಿಕೊಳ್ಳುವುದು ಕೂಡಾ ಸರಿಯಾಗಲಾರದು.
ಭಿನ್ನಾಭಿಪ್ರಾಯಗಳನ್ನು ಮಾನ್ಯಮಾಡುತ್ತಲೇ ತನ್ನ ಸಿದ್ದಾಂತವನ್ನು ಕಟ್ಟಿಕೊಳ್ಳುತ್ತಾ ಬಂದ ಆಶಿಶ್‌ನಂದಿಯವರೂ ಈ ರೀತಿಯ `ರಿಯಾಯಿತಿ'ಯನ್ನು ಒಪ್ಪಲಾರರು ಕೂಡಾ. ಈ ಹಿನ್ನೆಲೆಯಲ್ಲಿ ಅವರನ್ನು ಕೇಳಬೇಕಾಗಿರುವ ಮೊದಲ ಪ್ರಶ್ನೆ- `ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳಲ್ಲೇ ಹೆಚ್ಚು ಭ್ರಷ್ಟರಿದ್ದಾರೆ' ಎಂದು ಹೇಳುವುದು `ಘನತೆಗೆ ತಕ್ಕುದ್ದಲ್ಲ' ಮತ್ತು ' ಎಂದು ನಿಮ್ಮ ಆತ್ಮಸಾಕ್ಷಿಗೆ ಅನಿಸಿದ ಮೇಲೆ ಆ ಮಾತನ್ನು ಯಾಕೆ ಹೇಳಿದಿರಿ? ಎರಡನೆಯ ಪ್ರಶ್ನೆ -  ಅಂತಹ ಗಂಭೀರ ಆರೋಪವನ್ನು ಮಾಡುವಾಗ ಅದನ್ನು ಸಾಬೀತುಪಡಿಸುವಂತಹ ಪುರಾವೆಗಳನ್ನು ಯಾಕೆ ಒದಗಿಸಲಿಲ್ಲ? ಮೂರನೆಯ ಪ್ರಶ್ನೆ- ಕೆಳವರ್ಗದ ಭ್ರಷ್ಟಾಚಾರದಿಂದ ಸಮಾನತೆ ಸಾಧ್ಯ ಮತ್ತು ಇದರಿಂದ ಪ್ರಜಾಪ್ರಭುತ್ವ ಸುರಕ್ಷಿತವಾಗಿರುತ್ತದೆ ಎಂದು ಹೇಳಿದ್ದನ್ನು ಹೇಗೆ ಸಮರ್ಥಿಸಿಕೊಳ್ಳುವಿರಿ?
ಆಶಿಶ್‌ನಂದಿ ಅವರು `ಅಪರಾಧಿ' ಸ್ಥಾನದಲ್ಲಿ ನಿಲ್ಲಿಸಿರುವ ವರ್ಗ ದೇಶದ ಜನಸಂಖ್ಯೆಯ ಶೇಕಡಾ 75ರಷ್ಟಾಗುವುದರಿಂದ ಸಹಜವಾಗಿಯೇ ಭ್ರಷ್ಟರ ಪ್ರಮಾಣವೂ ಆ ವರ್ಗದಲ್ಲಿ ಹೆಚ್ಚು ಎಂಬ ಕುತರ್ಕವನ್ನು ಮಂಡಿಸಲು ಸಾಧ್ಯ. ಆದರೆ ಭ್ರಷ್ಟಾಚಾರವನ್ನು ಅಳೆಯುವವರು ಗಮನಕ್ಕೆ ತೆಗೆದುಕೊಳ್ಳಬೇಕಾಗಿರುವುದು ಭ್ರಷ್ಟರ ಸಂಖ್ಯೆಯನ್ನಲ್ಲ, ಭ್ರಷ್ಟತೆಯ ಪ್ರಮಾಣವನ್ನು. ಕಳೆದ 65 ವರ್ಷಗಳ ದೇಶದ ರಾಜಕೀಯ ಕ್ಷೇತ್ರದಲ್ಲಿ ತೀರ್ಮಾನ ಕೈಗೊಳ್ಳುವಂತಹ ಸ್ಥಾನಗಳಲ್ಲಿ, ಅಂದರೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವ ಪದವಿಗಳನ್ನು ಪಡೆದಿರುವ ಒಬಿಸಿ, ಎಸ್‌ಸಿ-ಎಸ್‌ಟಿಗಳ ಸಂಖ್ಯೆ ಎಷ್ಟು? ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯ, ಗ್ರಾಮಪಂಚಾಯತ್ ಸದಸ್ಯ ಮೊದಲಾದ ಸ್ಥಾನಗಳಲ್ಲಿ ಈ ವರ್ಗದ ಸಂಖ್ಯೆ ಹೆಚ್ಚಿರಬಹುದು (ರಾಜಕೀಯ ಮೀಸಲಾತಿಯ ಕಾರಣದಿಂದ), ಇವರಲ್ಲಿ ಭ್ರಷ್ಟರೂ ಇರಬಹುದು. ಆದರೆ ಒಬ್ಬ ಪ್ರಧಾನಿ,ಮುಖ್ಯಮಂತ್ರಿ ಇಲ್ಲವೇ ಸಚಿವರ ಭ್ರಷ್ಟಾಚಾರಕ್ಕೆ ಇಂತಹ ಕೆಳಹಂತದ ನೂರಾರು ಜನಪ್ರತಿನಿಧಿಗಳು ಮಾಡುವ ಭ್ರಷ್ಟಾಚಾರ ಸಮನಾಗಬಹುದೇ?
ಅದೇ ರೀತಿ ಆಡಳಿತ ಕ್ಷೇತ್ರದಲ್ಲಿ ಜವಾನ-ಕಾರಕೂನ ಹುದ್ದೆಗಳಲ್ಲಿ ಈ ವರ್ಗದ ಸಂಖ್ಯೆ ಹೆಚ್ಚಿರಬಹುದು. ಅವರಲ್ಲಿ ಒಂದಷ್ಟು ಮಂದಿ ಭ್ರಷ್ಟರೂ ಆಗಿರಬಹುದು. ಆದರೆ  ಪ್ರಮುಖ ತೀರ್ಮಾನ ಕೈಗೊಳ್ಳುವಂತಹ ಆಡಳಿತದ ಉನ್ನತ ಸ್ಥಾನಗಳಲ್ಲಿ ಈ ವರ್ಗದ ಪ್ರಾತಿನಿಧ್ಯ ಎಷ್ಟು? ಒಂದು ಸರ್ಕಾರಿ ಇಲಾಖೆಯ ಮುಖ್ಯಸ್ಥರಾಗಿರುವ ಅಧಿಕಾರಿ ಭ್ರಷ್ಟಾಚಾರದಿಂದ ಗಳಿಸುವ ಹಣಕ್ಕೆ, ಆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಜವಾನ-ಕಾರಕೂನರು ಲಂಚದ ರೂಪದಲ್ಲಿ ಪಡೆಯುತ್ತಿರುವ ಪುಡಿಗಾಸು ಸಮನಾಗಬಹುದೇ? ಇವೆಲ್ಲಕ್ಕಿಂತಲೂ ಮುಖ್ಯವಾಗಿ  ಮೇಲ್ಮಟ್ಟದಲ್ಲಿರುವವರು ಭ್ರಷ್ಟರಾದಾಗಲೇ ಭ್ರಷ್ಟಾಚಾರ ನಿಯಂತ್ರಣ ಮೀರಿ ಬೆಳೆಯುತ್ತಾ ಹೋಗುತ್ತದೆ ಎನ್ನುವ ಸರಳ ಸತ್ಯ ಆಶಿಶ್ ನಂದಿ ಅವರಿಗೆ ಯಾಕೆ ಹೊಳೆಯದೆ ಹೋಯಿತು ಎನ್ನುವುದು ಅಚ್ಚರಿ ಉಂಟುಮಾಡುತ್ತಿದೆ.
ಅವರ ಹೇಳಿಕೆಯ ಮೂರನೆಯ ಭಾಗ ಅರ್ಥಹೀನ ಮಾತ್ರ ಅಲ್ಲ ಅಪಾಯಕಾರಿ ಕೂಡಾ. ಶಿಕ್ಷಣ ಮತ್ತು ಉದ್ಯೋಗ ಸಮಾನತೆಯ ಪ್ರಮುಖ ಸಾಧನಗಳು ಎಂಬ ಅಭಿಪ್ರಾಯವನ್ನು ಬಹುತೇಕ ಸಮಾಜಶಾಸ್ತ್ರಜ್ಞರು ಒಪ್ಪಿಕೊಳ್ಳುತ್ತಾ ಬಂದಿದ್ದಾರೆ. ಇದಕ್ಕಾಗಿಯೇ ಅಲ್ಲವೇ, ಈ ಎರಡು ಕ್ಷೇತ್ರಗಳಲ್ಲಿ ಮೀಸಲಾತಿ ಜಾರಿಗೆ ತಂದಿರುವುದು. ಈ ಸಾಮಾನ್ಯ ಅಭಿಪ್ರಾಯವನ್ನೇ ಬುಡಮೇಲು ಮಾಡುವ ರೀತಿಯಲ್ಲಿ ಆಶಿಶ್‌ನಂದಿ ಅವರು `ಭ್ರಷ್ಟಚಾರ' ಎಂಬ ಹೊಸ ಸಾಧನವನ್ನು ಮುಂದಿಟ್ಟಿದ್ದಾರೆ. ಅಲ್ಲಿಗೆ ನಿಲ್ಲದೆ `ಭ್ರಷ್ಟಾಚಾರದ ಮೂಲಕ ಸಾಮಾಜಿಕ ಸಮಾನತೆ ಆಗ್ತಾ ಇರುವವರೆಗೆ ಪ್ರಜಾಪ್ರಭುತ್ವ ಸುರಕ್ಷಿತ' ಎಂಬ ತೀರ್ಮಾನವನ್ನು ಕೊಟ್ಟುಬಿಟ್ಟಿದ್ದಾರೆ. ಒಂದಷ್ಟು ಒಬಿಸಿ - ಎಸ್‌ಸಿ -ಎಸ್‌ಟಿಗಳು  ಭ್ರಷ್ಟಾಚಾರದಿಂದ ದುಡ್ಡು ಸಂಪಾದನೆ ಮಾಡುವುದರಿಂದ ಸಮಾನತೆ ಬರುತ್ತದೆ, ಪ್ರಜಾಪ್ರಭುತ್ವ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ ಅವರಲ್ಲಿ ಹೇಗೆ ಹುಟ್ಟಿಕೊಂಡಿತೋ ಗೊತ್ತಿಲ್ಲ. ಆದರೆ ಎಲ್ಲರಿಗೂ ಗೊತ್ತಿರುವ ಸತ್ಯ ಏನೆಂದರೆ ಭ್ರಷ್ಟರು ಕೇವಲ ಭ್ರಷ್ಟರಾಗಿರುವುದಿಲ್ಲ ಅವರು ಕಡು ಸ್ವಾರ್ಥಿಗಳಾಗಿರುತ್ತಾರೆ. ಮಾಯಾವತಿ-ಲಾಲು-ಮುಲಾಯಂ-ಕೋಡಾ ಅವರು ಭ್ರಷ್ಟಾಚಾರದ ಮೂಲಕ ಗಳಿಸಿದ್ದನ್ನು ಸಮಾನತೆಯನ್ನು ಸಾಧಿಸುವ  ಸದುದ್ದೇಶದಿಂದ ತಮ್ಮ ಜಾತಿ ಜನರಿಗೆ ಹಂಚಿಬಿಡುವಷ್ಟು ಮೂರ್ಖರಲ್ಲ. ಇಲ್ಲವೆ ಇವರ‌್ಯಾರೂ ತಾವು ಪ್ರತಿನಿಧಿಸುವ ಜಾತಿಗಳ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವರ ಜೀವನಮಟ್ಟದಲ್ಲಿ ಸುಧಾರಣೆ ಮಾಡಿದವರೂ ಅಲ್ಲ. ಅಧಿಕಾರ ಗಳಿಕೆಗಾಗಿ ಜಾತಿ ಹೆಸರಲ್ಲಿ ವೋಟ್‌ಬ್ಯಾಂಕ್ ಸೃಷ್ಟಿಸಿದವರು ಅಷ್ಟೇ.  ಉತ್ತರಪ್ರದೇಶ-ಬಿಹಾರಗಳಿಗೆ ಹೋಗಿ ಅಲ್ಲಿನ ಸಾಮಾನ್ಯ ಒಬಿಸಿ,ಎಸ್‌ಸಿ,ಎಸ್‌ಟಿಗಳ ಸ್ಥಿತಿಗತಿಯನ್ನು ಯಾರಾದರೂ ಕಣ್ಣಾರೆ ನೋಡಿದರೆ ಆಶಿಶ್‌ನಂದಿ ಥಿಯರಿಯಲ್ಲಿ ಎಷ್ಟೊಂದು ತೂತುಗಳಿವೆ ಎನ್ನುವುದು ಅರಿವಾಗಬಹುದು. ಹದಿನಾರು ವರ್ಷಗಳ ಕಾಲ `ಹಮಾರಾ ಲಲುವಾ' ಎಂದು ಎದೆಗಪ್ಪಿಕೊಂಡ ಬಿಹಾರದ ಒಬಿಸಿಗಳು ಯಾಕೆ ಲಾಲುಪ್ರಸಾದ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು? ಕಳೆದ ಚುನಾವಣೆಯಲ್ಲಿ ಮಾಯಾವತಿ ಅವರ ಸೋಲಿಗೆ ಏನು ಕಾರಣ? ಇವೆಲ್ಲವೂ ಗೊತ್ತಿದ್ದ ಆಶಿಶ್‌ನಂದಿ ಅವರು ಇಂತಹ ಬೀಸು ಹೇಳಿಕೆ ನೀಡಲು ಹೇಗೆ ಸಾಧ್ಯ?
ಹೆಚ್ಚು ಚರ್ಚೆಗೊಳಗಾಗದ ಅವರ ಹೇಳಿಕೆಯ ಕೊನೆಯ ಭಾಗ ಆಶಿಶ್ ನಂದಿ ಅವರ ಪ್ರಾಮಾಣಿಕತೆಯನ್ನೇ ಪ್ರಶ್ನಿಸುವಂತಿದೆ. `ಕಳೆದ ನೂರುವರ್ಷಗಳಲ್ಲಿ ಪಶ್ಚಿಮಬಂಗಾಳದಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿಗಳು ಅಧಿಕಾರಕ್ಕೆ ಬರದೆ ಇರುವುದರಿಂದಲೇ ಅದು ಭ್ರಷ್ಟಾಚಾರ ಮುಕ್ತ `ಸ್ವಚ್ಛ' ರಾಜ್ಯವಾಗಿ ಉಳಿದಿದೆ' ಎನ್ನುವ ಅವರ ಅಭಿಪ್ರಾಯ ತಿಳಿವಳಿಕೆಯ ಕೊರತೆಯಿಂದ ಆಗಿದ್ದರೆ ನಿರ್ಲಕ್ಷಿಸಿಬಿಡಬಹುದಿತ್ತು. ಆದರೆ ಆ ರಾಜ್ಯದ `ಮಣ್ಣಿನ ಮಗ'ನಾಗಿರುವ ಆಶಿಶ್‌ನಂದಿ ಅವರಿಗೆ ಉಳಿದವರೆಲ್ಲರಿಗಿಂತಲೂ ಆ ರಾಜ್ಯ ಚೆನ್ನಾಗಿ ಗೊತ್ತಿದೆ. ಮೊದಲನೆಯದಾಗಿ ಪಶ್ಚಿಮಬಂಗಾಳದ  ಶೇಕಡಾ 90ರಷ್ಟು ಎಡಪಕ್ಷಗಳ ಜನಪ್ರತಿನಿಧಿಗಳು ಪ್ರಾಮಾಣಿಕರೆನ್ನುವುದು ನಿರ್ವಿವಾದ. ಆದರೆ ಅಲ್ಲಿನ ಸಿಪಿಎಂ ಪದಾಧಿಕಾರಿಗಳ ಬಗ್ಗೆ ಇದೇ ರೀತಿಯ ಸರ್ಟಿಫಿಕೇಟ್ ನೀಡಲು ಸಾಧ್ಯವೇ? ಎಡರಂಗದ 32 ವರ್ಷಗಳ ಆಡಳಿತದ ಕಾಲದಲ್ಲಿ ಸಿಪಿಎಂನ ಶಕ್ತಿಶಾಲಿ ಹುದ್ದೆಯಾದ `ಲೋಕಲ್ ಕಮಿಟಿ ಸೆಕ್ರೆಟರಿ (ಎಲ್‌ಸಿಎಸ್)ಗಳಾಗಿ ಕೆಲಸ ಮಾಡಿದವರ ಆದಾಯವೃದ್ಧಿ ಬಗ್ಗೆ ಯಾರಾದರೂ ತನಿಖೆ ನಡೆಸಿದರೆ ಆಶಿಶ್‌ನಂದಿ ಅವರು ಹೇಳುವ `ಸ್ವಚ್ಛರಾಜ್ಯ'ದ ಬಣ್ಣಬಯಲಾಗಬಹುದು.
ಇವೆಲ್ಲಕ್ಕಿಂತಲೂ ಗಂಭೀರವಾದ ವಿಚಾರವನ್ನು ಆಶಿಶ್‌ನಂದಿ ಚರ್ಚೆಗೊಳಪಡಿಸಿಲ್ಲ. `ಭದ್ರಲೋಕ'ದವರೆಂದು ಕರೆಯಲಾಗುವ ಅಲ್ಲಿನ ಬ್ರಾಹ್ಮಣ ಜಮೀನ್ದಾರರು ಸ್ವಇಚ್ಛೆಯಿಂದ ಸಾವಿರಾರು ಎಕರೆ ಜಮೀನನ್ನು ಗೇಣಿದಾರರಿಗೆ ಬಿಟ್ಟುಕೊಟ್ಟಿರುವುದು ನಿಜ. ಆದರೆ ಭೂಮಿ ಮೇಲಿನ ಅಧಿಕಾರ ಕಳೆದುಕೊಂಡ ಅವರಿಗೆ ಬಯಸಿಯೋ, ಬಯಸದೆಯೋ ರಾಜಕೀಯ ಅಧಿಕಾರ ಕೈಗೆ ಸಿಕ್ಕಿದೆ. ಅದಿನ್ನೂ ಅವರ ಕೈಯಲ್ಲಿಯೇ `ಭದ್ರ'ವಾಗಿ ಉಳಿದಿದೆ. ಅದನ್ನು ಇನ್ನೂ ಕೆಳಗೆ ಬಿಟ್ಟುಕೊಟ್ಟಿಲ್ಲ. ಇಂದಿಗೂ ಅಲ್ಲಿನ ಎಡಪಕ್ಷಗಳ ಹಿರಿಯ ನಾಯಕರಲ್ಲಿ ಶೇಕಡಾ 90ರಷ್ಟು `ಭದ್ರಲೋಕ'ಕ್ಕೆ ಸೇರಿದವರು. ಶೇಕಡಾ 25ರಷ್ಟು ಜನಸಂಖ್ಯೆ ಹೊಂದಿರುವ ಮುಸ್ಲಿಮರಿಗೆ ರಾಜಕೀಯವೂ ಸೇರಿದಂತೆ ಯಾವ ಕ್ಷೇತ್ರಗಳಲ್ಲಿ ಎಷ್ಟು ಪ್ರಾತಿನಿಧ್ಯ ಸಿಕ್ಕಿದೆ ಎನ್ನುವುದನ್ನು ಸಾಚಾರ್ ಸಮಿತಿ ಬಯಲು ಮಾಡಿದೆ.
ಒಬಿಸಿ, ಎಸ್‌ಸಿ, ಎಸ್‌ಟಿಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಅದೊಂದು `ಸ್ವಚ್ಛ ರಾಜ್ಯ' ಎಂಬ ಸರ್ಟಿಫಿಕೇಟ್ ನೀಡುವ ಆಶಿಶ್‌ನಂದಿ ಅವರಿಗೆ ಅಲ್ಲಿನ ಶೇಕಡಾ 75ರಷ್ಟು ಕುಟುಂಬಗಳ ಬಡತನ ಯಾಕೆ ಕಾಣುತ್ತಿಲ್ಲ?  ಕೊನೆಯದಾಗಿ ಒಬಿಸಿ, ಎಸ್‌ಸಿ, ಎಸ್‌ಟಿಗಳು ಅಧಿಕಾರಕ್ಕೆ ಬರದೆ ಇರುವುದರಿಂದಲೇ ಪಶ್ಚಿಮಬಂಗಾಳ ಸ್ವಚ್ಛವಾಗಿ ಉಳಿದಿದೆ ಎನ್ನುವುದು ನಿಜವಾಗಿದ್ದರೆ ಇಡೀ ಭಾರತ ಸ್ವಚ್ಛವಾಗಿ ಉಳಿಯಬೇಕಿತ್ತಲ್ಲಾ? ಯಾಕೆಂದರೆ ಕಳೆದ 65ವರ್ಷಗಳಲ್ಲಿ  ಒಬಿಸಿ, ಎಸ್‌ಸಿ,ಎಸ್‌ಟಿಗೆ ಸೇರಿದವರ‌್ಯಾರೂ ಪ್ರಧಾನಿಯಾಗಲೇ ಇಲ್ಲವಲ್ಲಾ?