Tuesday, May 1, 2012

ದಲಿತ ಐಡೆಂಟಿಟಿಯ ಕೊನೆ ಇಲ್ಲದ ಬಿಕ್ಕಟ್ಟುಗಳು April 23, 2012

ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯಂದು `ಪ್ರಜಾವಾಣಿ` ಹೊರತಂದ ವಿಶೇಷ ಸಂಚಿಕೆ  ಉಂಟು ಮಾಡಿರುವ ಸಂಚಲನಕ್ಕೆ ಓದುಗರು ವ್ಯಕ್ತಪಡಿಸಿದ ಪ್ರತಿಕ್ರಿಯೆಗಳೇ ಸಾಕ್ಷಿ. 

ವಿಶೇಷ ಎಂದರೆ ಸಾಮಾನ್ಯ ವ್ಯಕ್ತಿಗಳಿಂದ ಹಿಡಿದು ಸಾಹಿತಿಗಳು, ಸಮಾಜ ಸೇವಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳವರೆಗೆ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 90ರಷ್ಟು ಓದುಗರು ದಲಿತೇತರರು. ಅವರ ಮನಸ್ಸಲ್ಲಿ ಮೂಡಿದ ಅಪರಾಧಿ ಪ್ರಜ್ಞೆ, ಆತ್ಮಾವಲೋಕನದ ಹಂಬಲ, ಬದಲಾವಣೆಯ ತುಡಿತಗಳನ್ನು ಅವರು ಬರೆದ ಪತ್ರಗಳಲ್ಲಿ ಕಾಣಬಹುದು. 

ಜಾತಿ-ಧರ್ಮಗಳಿಂದ  ಸೀಳಿ ಹೋಗಿರುವ ಸಮಾಜದಲ್ಲಿ ಈ ರೀತಿಯಲ್ಲಿ ಆಲೋಚನೆಯನ್ನಾದರೂ ಮಾಡಬಲ್ಲ ಜಾಗೃತ ಸಮುದಾಯ ಇದೆ ಎನ್ನುವುದೇ ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸುವಂತಹ ಬೆಳವಣಿಗೆ. 

ಆಶಯದ ಮಟ್ಟದಲ್ಲಿ ಇವೆಲ್ಲ ಸರಿ, ಆದರೆ ಆಚರಣೆಯಲ್ಲಿ ಈಗಲೂ ಅಸ್ಪೃಶ್ಯತೆಯಂತಹ ಅಮಾನವೀಯ ನಡವಳಿಕೆಯನ್ನು ಮೈಗೂಡಿಸಿಕೊಂಡಿರುವ ಮತ್ತು ಅದನ್ನು ಬೆಂಬಲಿಸುವ ಜನವರ್ಗ ದೊಡ್ಡಸಂಖ್ಯೆಯಲ್ಲಿ ನಮ್ಮ ನಡುವೆ ಇದೆ ಎನ್ನುವುದು ಆಶಯ ಮತ್ತು ಆಚರಣೆಯ ನಡುವಿನ ಕಂದಕವನ್ನು ತೋರಿಸುತ್ತದೆ.

ವಿಶೇಷ ಸಂಚಿಕೆಯನ್ನು ರೂಪಿಸುವಾಗ ನಮ್ಮ ಸಂಪಾದಕರು ನೀಡಿದ್ದ ಕೆಲವು ಸಲಹೆಗಳಲ್ಲಿ ಎರಡು ಪ್ರಮುಖವಾದುವುಗಳು. ನಮ್ಮಲ್ಲಿಯೇ ಯಾರಾದರೊಬ್ಬ ದಲಿತೇತರ ಸಹೋದ್ಯೋಗಿ ದಲಿತರ ಕೇರಿಗೆ ಹೋಗಿ ಒಂದು ದಿನ ಜತೆಯಲ್ಲಿಯೇ ಇದ್ದು ಅವರ ನಿತ್ಯ ಜೀವನದ ಯಥಾವತ್ ವರದಿಯನ್ನು ಮಾಡಬೇಕೆಂಬುದು ಅವುಗಳಲ್ಲೊಂದು. 

ಅದರಂತೆ ನಮ್ಮ ಮೈಸೂರಿನ ಹಿರಿಯ ವರದಿಗಾರ ಸುದೇಶ್ ದೊಡ್ಡಪಾಳ್ಯ ಅವರು ನಂಜನಗೂಡು ತಾಲ್ಲೂಕಿನ ಕಪ್ಪಸೋಗೆ ಎಂಬ ಊರಿಗೆ ಹೋಗಿ ಒಂದು ದಿನ ಅಲ್ಲಿದ್ದು ತಮ್ಮ ಅನುಭವವನ್ನು ದಾಖಲಿಸಿದ್ದರು. ಸಂಚಿಕೆಯ ಅತಿಥಿ ಸಂಪಾದಕರಾದ ದೇವನೂರ ಮಹಾದೇವ ಅವರಿಂದಲೂ ವಿಶೇಷ ಪ್ರಶಂಸೆಗೆ ಪಾತ್ರವಾದ ಈ ವರದಿ ಪ್ರಜ್ಞಾವಂತರೆಲ್ಲ ಆತ್ಮಸಾಕ್ಷಿಯನ್ನು ಕೆಣಕುವಂತಿತ್ತು. 

ಅದೇ ಅದರ ಉದ್ದೇಶ ಆಗಿತ್ತೇ ಹೊರತಾಗಿ ಯಾವುದೋ ಒಂದು ಊರಿನ ಮರ್ಯಾದೆ ತೆಗೆಯುವುದು ಇಲ್ಲವೇ ಜಗಳ ಹಚ್ಚುವುದು ಆಗಿರಲಿಲ್ಲ. ಕಪ್ಪಸೋಗೆ ಎಂಬ ಊರನ್ನು ಪ್ರಾತಿನಿಧಿಕವಾಗಿ ಆಯ್ಕೆಮಾಡಲಾಗಿತ್ತು. ಇದರ ಅರ್ಥ ಆ ಊರೊಂದನ್ನು ಬಿಟ್ಟು ಬೇರೆಲ್ಲೂ ಅಸ್ಪೃಶ್ಯತೆಯ ನಡವಳಿಕೆ ಇಲ್ಲ ಎಂದಲ್ಲ. ಅಲ್ಲಿಗಿಂತಲೂ ಭೀಕರವಾದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಆಚರಿಸುವ ಊರುಗಳು ಇವೆ.

 ಆದರೆ ಪತ್ರಿಕೆಯಲ್ಲಿ ಪ್ರಕಟವಾದ ವರದಿಯಿಂದ ಊರಿನ ಮರ್ಯಾದೆ ಹಾಳಾಯಿತೆಂದು ಅಲ್ಲಿನ ಒಂದು ವರ್ಗದ ಜನರು ಪ್ರತಿಭಟಿಸಿದ್ದಾರೆ. ಇದರಿಂದಾಗಿ ಅಲ್ಲಿ ನಿರ್ಮಾಣವಾಗಿದ್ದ ಬಿಗುವಿನ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹೋಗಿ ನಾಲ್ಕುದಿನ ಕಾವಲು ನಿಲ್ಲಬೇಕಾಯಿತು. 

ನಮ್ಮ ವರದಿಗಾರರನ್ನು ಊರಿಗೆ ಕರೆದುಕೊಂಡು ಬಂದವನು ಎಂಬ ಶಂಕೆಯಿಂದ ಅದೇ ಊರಿನ ದಲಿತ ವಿದ್ಯಾರ್ಥಿಯೊಬ್ಬನನ್ನು ಬೆದರಿಸುವ ಪ್ರಯತ್ನಗಳೂ ನಡೆದಿವೆ. ಊರಲ್ಲಿ ಅಸ್ಪೃಶ್ಯತೆ ಆಚರಣೆ ನಡೆಯುತ್ತಿಲ್ಲ ಎಂದು ಯಾರೂ ಧೈರ್ಯದಿಂದ ಮುಂದೆ ಬಂದು ಹೇಳುತ್ತಿಲ್ಲ. ಅಂತಹ ನಡವಳಿಕೆಯಿಂದ ಊರಿನ ಮರ್ಯಾದೆ ಹಾಳಾಗುತ್ತಿದೆ ಎನ್ನುವ ಅವಮಾನವೂ ಅವರನ್ನು ಕಾಡುತ್ತಿಲ್ಲ. ಅವೆಲ್ಲವೂ ಪತ್ರಿಕೆಯಲ್ಲಿ ಪ್ರಕಟವಾಗಬಾರದಿತ್ತು ಎನ್ನುವುದಷ್ಟೇ ಅವರ ವಾದ. ಇದಕ್ಕೇನು ಪರಿಹಾರ?

 ಪೊಲೀಸರು ಒಂದಷ್ಟು ದಿನ ಕಾವಲು ಕಾಯಬಹುದು, ಅದರ ನಂತರ? ಕಪ್ಪಸೋಗೆ ಎನ್ನುವ ಊರು ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸೇರಿದ್ದು. ಆ ಊರಲ್ಲಿ ಇಂತಹ ಘಟನೆ ನಡೆದಾಗ ಅಲ್ಲಿಗೆ ಮೊದಲು ಧಾವಿಸಿಹೋಗಬೇಕಾದವರು ಅಲ್ಲಿನ ಶಾಸಕರು. 

ಆದರೆ ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ನೊಂದಿರುವ ದಲಿತರಿಗೆ ನೆರವಾಗಬೇಕೆಂಬ ಪ್ರಾಮಾಣಿಕ ಉದ್ದೇಶ ಮೀಸಲು ಕ್ಷೇತ್ರದ ದಲಿತ ಪ್ರತಿನಿಧಿಗಳಿಗೆ ಇದ್ದರೂ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ಸ್ಥಿತಿಯಲ್ಲಿ ಅವರಿಲ್ಲ. 

ಎಲ್ಲ ಜಾತಿ-ಧರ್ಮಗಳ ಮತಗಳನ್ನು ಅವಲಂಬಿಸಿರುವ ಅವರು ಕೇವಲ ದಲಿತರ ಪರವಾಗಿ ನಿಂತರೆ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ಭವಿಷ್ಯದಲ್ಲಿ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದೆಂಬ ಎಚ್ಚರಿಕೆಯಿಂದಲೇ ಅಂಬೇಡ್ಕರ್ ಅವರು ದಲಿತ ಮತದಾರರಷ್ಟೇ ದಲಿತ ಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಹ ಪ್ರತ್ಯೇಕ ಮತದಾನದ ಹಕ್ಕಿಗಾಗಿ ಒತ್ತಾಯಿಸಿದ್ದು.   

ಇತಿಹಾಸವನ್ನು ಕೆದಕಿ, ಪ್ರತ್ಯೇಕ ಮತದಾನ ಹಕ್ಕು ಯಾಕೆ ಸಿಗಲಿಲ್ಲ ಎನ್ನುವ ಚರ್ಚೆಯನ್ನು ಬೆಳೆಸುವುದರಿಂದ ಇನ್ನಷ್ಟು ಮನಸ್ಸುಗಳು ಒಡೆದುಹೋಗಬಹುದೇ ಹೊರತು ಬೇರೇನೂ ಲಾಭವಾಗಲಾರದು. ಇದಕ್ಕಾಗಿ ಬೇರೆಯೇ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ. 

ಈ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರು ವಿಶೇಷ ಸಂಚಿಕೆಯ ಸಂಪಾದಕೀಯಕ್ಕೆ ಸೂಚಿಸಿದ್ದ `ಸಾಮಾಜಿಕ ಪೊಲೀಸರು` ಎಂಬ ವಿಷಯದ ಬಗ್ಗೆ ಚರ್ಚೆ ನಡೆಯುವ ಅಗತ್ಯ ಇದೆ. ಜರ್ಮನಿಯೂ ಸೇರಿದಂತೆ ಕೆಲವು ದೇಶಗಳಲ್ಲಿ ಇಂತಹದ್ದೊಂದು ವ್ಯವಸ್ಥೆ ಇರುವುದನ್ನು ಅವರು ಹೇಳಿದ್ದರು. 

ಜಾತಿ ತಾರತಮ್ಯ ಇಲ್ಲವೇ ಅಸ್ಪೃಶ್ಯತೆಯ ಆಚರಣೆ ವಿಕೋಪಕ್ಕೆ ಹೋಗುವವರೆಗೆ ಕಾಯುತ್ತ ಕೂರದೆ, ಅಂತಹ ನಡವಳಿಕೆಗಳ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿ ಎರಡು ಪಂಗಡಗಳ ಜತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎನ್ನುವುದು ಅವರ ಅಭಿಪ್ರಾಯ. 

ವೃತ್ತಿನಿರತ ರಾಜಕಾರಣಿಗಳನ್ನು ದೂರ ಇಟ್ಟು ಸಾಮಾಜಿಕ ಕಳಕಳಿ ಹೊಂದಿರುವ ಅಧಿಕಾರಿಗಳು,ಪ್ರಾಧ್ಯಾಪಕರು, ವಕೀಲರು, ಪತ್ರಕರ್ತರು, ಸಮಾಜಸೇವಕರು -ಹೀಗೆ ವಿವಿಧ ವರ್ಗಗಳ ಪ್ರತಿನಿಧಿಗಳನ್ನು ಈ `ಸಾಮಾಜಿಕ ಪೊಲೀಸ್` ವ್ಯವಸ್ಥೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ದೇವನೂರ ಹೇಳುತ್ತಾರೆ.

  ಕಪ್ಪಸೋಗೆಯಿಂದಲೇ ಇಂತಹದ್ದೊಂದು ಸಾಮಾಜಿಕ ಸಾಮರಸ್ಯದ ಪ್ರಯೋಗವನ್ನು ಪ್ರಾರಂಭಿಸಬಹುದೇನೋ?

`ಹಳ್ಳಿಗಳಲ್ಲಿ ಇಂತಹ ಪರಿಸ್ಥಿತಿ ಇರಬಹುದು, ನಗರದ ಶಿಕ್ಷಿತ ವಲಯಗಳಲ್ಲಿ ಅಸ್ಪೃಶ್ಯತೆ ಎಲ್ಲಿದೆ? ಯಾರು ಯಾರ ಮನೆಯ ಒಳಗೆ ಹೋಗಿ ಊಟ-ತಿಂಡಿ ಮಾಡುವ ಪರಿಸ್ಥಿತಿ ಇಲ್ಲವೇ? ಮಡಿ-ಮೈಲಿಗೆಯನ್ನು ಯಾರು ಆಚರಿಸುತ್ತಾರೆ?` ಎಂದೆಲ್ಲ ಪ್ರಶ್ನಿಸುವವರು ಇದ್ದಾರೆ. ಮೇಲ್ನೋಟಕ್ಕೆ ಇದು ಸತ್ಯದಂತೆ ಕಾಣುತ್ತದೆ ಕೂಡಾ.
 
ಆದರೆ ಇದು ನಿಜವಾದ ಸತ್ಯ ಅಲ್ಲ. ಇದಕ್ಕೆ ಸಂಬಂಧಿಸಿದಂತೆ ಸಂಪಾದಕರು ಕೊಟ್ಟಿದ್ದ ಇನ್ನೊಂದು ಸಲಹೆ ಕುತೂಹಲಕರವಾಗಿತ್ತು. `ಸರ್ಕಾರೇತರ ಅದರಲ್ಲೂ ಮುಖ್ಯವಾಗಿ ಅಸಂಪ್ರದಾಯಿಕವಾದ, ಉದಾಹರಣೆಗೆ ಕ್ರಿಕೆಟ್, ಸಿನೆಮಾ, ಸಂಗೀತ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಅವರಿಂದ ಅನುಭವವನ್ನು ಬರೆಸಬೇಕು, ಆ ಮೂಲಕ ಅವರನ್ನು ಸ್ಪೂರ್ತಿದಾಯಕರನ್ನಾಗಿ ಬಿಂಬಿಸಬೇಕು` ಎನ್ನುವುದು ಅವರ ಅಭಿಪ್ರಾಯವಾಗಿತ್ತು. 

ಆದರೆ ಅಂತಹವರನ್ನು ಹುಡುಕಲು ಹೊರಟಾಗ ಆದ ಅನುಭವ ಉತ್ತೇಜನಕಾರಿಯಾಗಿರಲಿಲ್ಲ. ಸಾಂಪ್ರದಾಯಿಕವಾಗಿ ದಲಿತರ ಪ್ರಾತಿನಿಧ್ಯ ಇಲ್ಲದೆ ಇರುವ ಹಲವಾರು ಕ್ಷೇತ್ರಗಳಲ್ಲಿ ಈಗ ದಲಿತರಿದ್ದಾರೆ ಎನ್ನುವುದು ನಿಜ. ಆದರೆ ಅವರಲ್ಲಿ ಹೆಚ್ಚಿನವರು ತಮ್ಮ ಗುರುತು ಬಹಿರಂಗಕ್ಕೆ ಇಚ್ಚಿಸುವುದಿಲ್ಲ. ಇದರಿಂದಾಗಿ ಈ ಬಗ್ಗೆ ಲೇಖನ ಪ್ರಕಟಣೆ ಸಾಧ್ಯವಾಗಲಿಲ್ಲ.

ರಾಜಕೀಯ ಮತ್ತು ಸಾಹಿತ್ಯ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ದಲಿತರು ತಮ್ಮ ಜಾತಿಯನ್ನು ಬಹಿರಂಗಪಡಿಸಲು ಇಚ್ಚಿಸುವುದಿಲ್ಲ. ರಾಜಕೀಯದಲ್ಲಿ ಜಾತಿ ಒಂದು ಬಂಡವಾಳದ ರೂಪದಲ್ಲಿ ಕೆಲಸ ಮಾಡುವುದರಿಂದ ಅಲ್ಲಿ  ದಲಿತರು ಪೈಪೋಟಿಗೆ ಬಿದ್ದು ಜಾತಿಯನ್ನು ಘೋಷಿಸಿಕೊಳ್ಳುತ್ತಾರೆ. 

ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಲ್ಲಿ ದಲಿತ ಸಾಹಿತ್ಯ ಚಳುವಳಿ ಶಕ್ತಿಶಾಲಿ ರೂಪದಲ್ಲಿ ಸಾಗಿಬಂದ ಕಾರಣದಿಂದಾಗಿ ಆ ಕ್ಷೇತ್ರದಲ್ಲಿಯೂ ದಲಿತ ಲೇಖಕರು ತಮ್ಮ ಗುರುತನ್ನು ಬಹಿರಂಗಪಡಿಸಲು ಹಿಂಜರಿಯುವುದಿಲ್ಲ. 

ಆದರೆ ಬೇರೆ ಕ್ಷೇತ್ರಗಳಲ್ಲಿ ಅಂತಹ ಸ್ಥಿತಿ ಇಲ್ಲ. ದಲಿತರೆನ್ನುವುದು ಬಹಿರಂಗಗೊಂಡರೆ ಬಹಳ ಕಷ್ಟಪಟ್ಟು ಗಳಿಸಿಕೊಂಡಿರುವ ಸ್ಥಾನಕ್ಕೆ ಕುತ್ತು ಬರಬಹುದು ಎಂಬ ಆತಂಕ ಅವರನ್ನು ಕಾಡುತ್ತಿರುತ್ತದೆ. ಇದು ಕಣ್ಣಿಗೆ ಕಾಣಿಸಿಕೊಳ್ಳದ ಮತ್ತು ರಹಸ್ಯವಾಗಿ ಕಾರ್ಯರೂಪದಲ್ಲಿರುವ ಅಸ್ಪೃಶ್ಯತೆ. 

ಹಳ್ಳಿಗಳಲ್ಲಿ ಎಲ್ಲರ ಕಣ್ಣಿಗೆ ಕಾಣಿಸುವಂತೆ ಬಹಿರಂಗವಾಗಿ ನಡೆಯುತ್ತಿರುವ `ಮುಟ್ಟದಿರುವ` ಇಲ್ಲವೆ `ಒಳಗೆ ಕರೆದುಕೊಳ್ಳದ` ಸಾಮಾನ್ಯ ಬಗೆಯ ಅಸ್ಪೃಶ್ಯತೆಗಿಂತ ಭಿನ್ನವಾದುದು. ನಗರದಲ್ಲಿ ದಲಿತರಿಗೆ ಮನೆಯೊಳಗೆ ಪ್ರವೇಶ ಇರುತ್ತದೆ, ಜತೆಯಲ್ಲಿಯೇ ಕೂತು ಊಟಮಾಡುವ ಅವಕಾಶವೂ ಇರುತ್ತದೆ. 

ಆದರೆ ಅದೇ ದಲಿತ ಯುವಕ ಯಾವುದೋ ಉದ್ಯೋಗಕ್ಕೆ ಅರ್ಜಿ ಹಾಕಿದರೆ ಅದನ್ನು ಮೆತ್ತಗೆ ಪಕ್ಕಕ್ಕೆ ಸರಿಸಲಾಗುತ್ತದೆ. ಸರ್ಕಾರಿ ಇಲಾಖೆಗಳಲ್ಲಿ ಭರ್ತಿಯಾಗದೆ ಬಿದ್ದಿರುವ ಬ್ಯಾಕ್‌ಲಾಗ್ ಹುದ್ದೆಗಳ ಹಿಂದೆಯೂ ಇಂತಹದ್ದೇ ಹುನ್ನಾರ ಇದೆ. ಪರಿಣಾಮದ ದೃಷ್ಟಿಯಿಂದ ನೋಡಿದರೆ ಇದು ಹಳ್ಳಿಗಳಲ್ಲಿ ನಡೆಯುವ ಅಸ್ಪೃಶ್ಯತೆಗಿಂತಲೂ ಕ್ರೂರವಾದುದು.
 
ಬಹಿರಂಗವಾಗಿ ಆಚರಿಸಲಾಗುವ ಅಸ್ಪೃಶ್ಯತೆ ವಿರುದ್ಧ ಪ್ರತಿಭಟಿಸಬಹುದು, ಅದರ ವಿರುದ್ಧ ಹೋರಾಟಕ್ಕೆ ಕಾನೂನಿನ ಬೆಂಬಲವೂ ಇದೆ. ಆದರೆ ಕಣ್ಣಿಗೆ ಕಾಣದ ಎರಡನೆ ಬಗೆಯ ಅಸ್ಪೃಶ್ಯತೆಯನ್ನು ಎದುರಿಸಲು ಅಂತಹ ಯಾವ ಹತಾರಗಳೂ ಸದ್ಯಕ್ಕೆ ಇಲ್ಲ, ಸುಲಭದಲ್ಲಿ ಶತ್ರುವರ್ಗ ರಚಿಸುವ ವ್ಯೆಹಗಳು ಬಡಪಾಯಿ ದಲಿತರಿಗೆ ಗೊತ್ತಾಗುವುದೂ ಇಲ್ಲ. 

ದಲಿತ ಸಮುದಾಯದ ಯಶಸ್ವಿ ವ್ಯಕ್ತಿಗಳೆಲ್ಲರೂ ಇಂತಹ ಆತಂಕದಿಂದಲೇ ತಮ್ಮ  ಗುರುತನ್ನು ಬಚ್ಚಿಡುತ್ತಾರೆ ಎಂದು ಸಾರಸಗಟಾಗಿ ಹೇಳುವುದು ಕೂಡಾ ಸರಿಯಾಗಲಾರದು. ದೇಶ ಕಂಡ ಅತ್ಯುತ್ತಮ ಕ್ರಿಕೆಟಿಗರಲ್ಲೊಬ್ಬರಾಗಿರುವ ವಿಜಯಕೃಷ್ಣ ತಮ್ಮನ್ನು ದಲಿತರೆಂದು ಗುರುತಿಸಿಕೊಳ್ಳಲೇ ಇಲ್ಲ, ಈಗಲೂ ಯಾರಾದರೂ ತಮ್ಮ ಜಾತಿ ಮೂಲಕ ಗುರುತಿಸುವುದು ಅವರಿಗೆ ಇಷ್ಟವಾಗುವುದಿಲ್ಲ. 

ಕ್ರಿಕೆಟ್ ಆಡುತ್ತಿದ್ದ ಕಾಲದಲ್ಲಿ ಆ ರೀತಿ ನಡೆದುಕೊಂಡಿದ್ದರೆ ಅದಕ್ಕೆ ಕಾರಣಗಳು ಇರಬಹುದು. ಆದರೆ ಈಗ ? ಖ್ಯಾತ ಸಂಗೀತಗಾರ ಇಳಯರಾಜಾ ಅವರು  ಇಂದು ಯಾವ ಎತ್ತರಕ್ಕೆ ಏರಿದ್ದಾರೆಂದರೆ ಅವರು ದಲಿತರೆಂದು ಹೇಳಿಕೊಂಡರೂ ಆ ಕಾರಣಕ್ಕಾಗಿ ಅವರನ್ನು ಈಗ ಇರುವ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಾಗಲಾರದು.
 
ಪೊಲೀಸ್ ಸೇವೆಯಿಂದ ನಿವೃತ್ತರಾಗಿರುವ ಡಾ.ಅಜಯಕುಮಾರ್‌ಸಿಂಗ್ ದಲಿತರೆಂದು ಹೇಳಿಕೊಳ್ಳುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ. ಇಂತಹ ಪ್ರಭಾವಶಾಲಿ ದಲಿತ ಸಾಧಕರು  ಜಾತಿ ರಹಸ್ಯವನ್ನು ಕಾಪಾಡಿಕೊಂಡು ಬರುವುದನ್ನು ಸಮರ್ಥಿಸಿಕೊಳ್ಳುವುದು ಕಷ್ಟ.

ಇತ್ತೀಚೆಗೆ ನಮ್ಮ ಪುರವಣಿಯೊಂದರಲ್ಲಿ ದಲಿತ ಸಮುದಾಯಕ್ಕೆ ಸೇರಿರುವ ರಂಗಕರ್ಮಿಯ ಪರಿಚಯ ಪ್ರಕಟವಾಯಿತು. ಅದನ್ನು ಓದಿದ ಸ್ನೇಹಿತರೊಬ್ಬರು ದಲಿತ ಕಲಾವಿದ ಎಂದು ಕರೆದಿದ್ದು ಸರಿಯೇ ಎಂದು ಪ್ರಶ್ನಿಸಿದರು. ಇವೆಲ್ಲವೂ ಚರ್ಚೆ ನಡೆಯಬೇಕಾದ ಸೂಕ್ಷ್ಮ ವಿಚಾರಗಳು. ಒಬ್ಬ ಕಳ್ಳನನ್ನೊ, ವಂಚಕನನ್ನೋ ಆತ ಹುಟ್ಟಿದ ಜಾತಿ ಮೂಲಕ ಪರಿಚಯಿಸುವುದು  (ಉದಾಹರಣೆಗೆ ಚಂದಪ್ಪ ಹರಿಜನ) ಖಂಡಿತ ಸರಿ ಅಲ್ಲ.
 
ವ್ಯಕ್ತಿಯೊಬ್ಬ ನಡೆಸಿರುವ ಅಪರಾಧಕ್ಕೂ, ಆತ ಹುಟ್ಟಿದ ಜಾತಿಗೂ ಸಂಬಂಧ ಇರುವುದಿಲ್ಲ. ಆದರೆ ಉತ್ತಮ ಕೆಲಸ ಮಾಡಿರುವ ಇಲ್ಲವೆ ಇತರರಿಗೆ ಸ್ಪೂರ್ತಿ ನೀಡಬಲ್ಲಂತಹ ಸಾಧನೆ ಮಾಡಿದ  ದಲಿತ ವ್ಯಕ್ತಿಯನ್ನು ದಲಿತನೆಂದು ಯಾಕೆ ಪರಿಚಯಿಸಬಾರದು ಎಂದು ಕೇಳುವವರಿದ್ದಾರೆ. 

ದಲಿತ ಸಾಧಕರು ತಮ್ಮ ಜಾತಿಯನ್ನು ಬಹಿರಂಗ ಪಡಿಸುವುದರಿಂದ, ಕೀಳರಿಮೆಯಿಂದ ಬಳಲುತ್ತಿರುವ ಕೋಟ್ಯಂತರ ದಲಿತ ಯುವಕ-ಯುವತಿಯರಿಗೆ ಸ್ಫ್ಪೂರ್ತಿ ನೀಡಿದಂತಾಗುತ್ತದೆ ಎನ್ನುವುದು ಅವರ ವಾದ. ವಿಜಯಕೃಷ್ಣ, ಇಳಯರಾಜಾ ಇಲ್ಲವೇ ಇತ್ತೀಚಿನ ಯಶಸ್ವಿ ಚಿತ್ರ `ಸಂಜು ವೆಡ್ಸ್ ಗೀತಾ` ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಜಾತಿಯ ಬಲದಿಂದ ಸಾಧನೆಯ ಶಿಖರ ಏರಿದವರಲ್ಲ.
 
ಆದರೆ ಜಾತಿ ಎನ್ನುವ ಹೊರೆಯನ್ನು ಬೆನ್ನಮೇಲೆ ಕಟ್ಟಿಕೊಂಡು ಸಾಧನೆಯ ಶಿಖರವನ್ನು ಏರಿದ ಅವರ ಪ್ರಯತ್ನ ಖಂಡಿತ ಇತರ ದಲಿತರು ಸಾಧನೆಯ ಹಾದಿಯಲ್ಲಿ ಮುಂದುವರಿಯಲು ಪ್ರೇರೇಪಿಸುವಂತಹದ್ದು. ಈ ಹಿನ್ನೆಲೆಯಲ್ಲಿ ದಲಿತ ಐಡೆಂಟಿಟಿಯ ಬಿಕ್ಕಟ್ಟನ್ನು ಇನ್ನಷ್ಟು ಚರ್ಚೆಗೆ ಒಡ್ಡುವ ಅಗತ್ಯ ಇದೆ.

ದಲಿತ ರಾಜಕಾರಣಕ್ಕೆ ಯಾರು ಮಾದರಿ? April 16, 2012

`ನಾ ವು ರಾಜಕೀಯ ಕ್ಷೇತ್ರದಲ್ಲಿ ಸಮಾನತೆ ಪಡೆಯಲಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದ ಅಸಮಾನತೆ ಎಂದಿನಂತೆ ಮುಂದುವರಿಯಲಿದೆ. ಈ ವಿರೋಧಾಭಾಸವನ್ನು ನಿವಾರಿಸಿಕೊಳ್ಳದೆ ಹೋದರೆ ಅಸಮಾನತೆಯಿಂದ ನೊಂದವರು ಮುಂದೊಂದು ದಿನ ರಾಜಕೀಯ ಪ್ರಜಾಪ್ರಭುತ್ವವನ್ನು ಕಿತ್ತೊಗೆಯಲಿದ್ದಾರೆ` ಎಂದು 1950ರ ಜನವರಿ 26ರಂದು ಭಾರತ ಸಂವಿಧಾನವನ್ನು ಒಪ್ಪಿಕೊಂಡ ದಿನವೇ ಬಿ.ಆರ್.ಅಂಬೇಡ್ಕರ್ ಹೇಳಿದ್ದರು.
 
ಸಮಾನತೆಯನ್ನು ಸಾರುವ ಪ್ರಜಾಪ್ರಭುತ್ವ ಮತ್ತು ಅಸಮಾನತೆಯೇ ಸಾರವಾಗಿರುವ ಸಾಮಾಜಿಕ ವ್ಯವಸ್ಥೆಯ ನಡುವಿನ ವೈರುಧ್ಯದ ಅರಿವು ಅವರಿಗಿದ್ದ ಕಾರಣದಿಂದಲೇ ಕಟ್ಟಾ ಪ್ರಜಾಪ್ರಭುತ್ವ ಪ್ರೇಮಿಯಾಗಿದ್ದ ಅಂಬೇಡ್ಕರ್ ಕೂಡಾ ಇಂತಹ ಕಟುಮಾತುಗಳನ್ನು ಆಡಿದ್ದರು. ಅರವತ್ತೆರಡು ವರ್ಷಗಳ ನಂತರವಾದರೂ ಪರಿಸ್ಥಿತಿ ಬದಲಾಗಿದೆಯೇ?
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಖ್ಯಾಬಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಎಂದು ಹೇಳುವವರಿದ್ದಾರೆ. 

ರಾಜಕೀಯ ನಾಯಕರ ಯಶಸ್ಸಿನಲ್ಲಿ ಜಾತಿ ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ವಿಶ್ಲೇಷಿಸುವವರಿದ್ದಾರೆ. ಹೀಗಿದ್ದರೂ ದೇಶದ ಜನಸಂಖ್ಯೆಯಲ್ಲಿ ಶೇಕಡಾ 16.2ರಷ್ಟಿರುವ ಪರಿಶಿಷ್ಟ ಜಾತಿಯವರಲ್ಲಿ ಯಾರೊಬ್ಬರೂ ಪ್ರಧಾನಮಂತ್ರಿ ಆಗಲಿಲ್ಲ. ಪ್ರಧಾನಿಯಾಗುವ ಅರ್ಹತೆಯನ್ನು ಸಾಧನೆಯ ಬಲದಿಂದಲೇ ಹೊಂದಿದ್ದ ಬಾಬು ಜಗಜೀವನರಾಂ ಅವರಿಗೆ ಪ್ರಧಾನಿ ಪಟ್ಟದ ಸಮೀಪವೂ ಸುಳಿಯಲೂ ಸಾಧ್ಯವಾಗಲಿಲ್ಲ.
 
ಆಂಧ್ರಪ್ರದೇಶ (ಸಂಜೀವಯ್ಯ), ರಾಜಸ್ತಾನ (ಜಗನ್ನಾಥ ಪಹಾಡಿಯಾ), ಉತ್ತರ ಪ್ರದೇಶ (ಮಾಯಾವತಿ), ಬಿಹಾರ (ರಾಮಸುಂದರ ದಾಸ್) ಮತ್ತು ಮಹಾರಾಷ್ಟ್ರವನ್ನು (ಸುಶೀಲ್‌ಕುಮಾರ್ ಶಿಂಧೆ) ಹೊರತುಪಡಿಸಿದರೆ ಬೇರೆ ಯಾವ ರಾಜ್ಯಗಳಲ್ಲಿಯೂ ದಲಿತರು ಮುಖ್ಯಮಂತ್ರಿಯಾಗಲಿಲ್ಲ. ಹಿಮಾಚಲಪ್ರದೇಶ, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದರೂ ಆ ರಾಜ್ಯಗಳಲ್ಲಿ ಯಾರೂ ಮುಖ್ಯಮಂತ್ರಿ ಆಗಲಿಲ್ಲ. 

ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ದಲಿತ ಚಳವಳಿ ಹೆಚ್ಚು ಸಕ್ರಿಯವಾಗಿರುವ ಕರ್ನಾಟಕದಲ್ಲಿಯೂ ದಲಿತರೂ ಮುಖ್ಯಮಂತ್ರಿಯಾಗಲಿಲ್ಲ. ಪ್ರಧಾನಿ ಇಲ್ಲವೇ ಮುಖ್ಯಮಂತ್ರಿಗಳ ಸ್ಥಾನ ಒತ್ತಟ್ಟಿಗಿರಲಿ, ಉತ್ತರಪ್ರದೇಶವೊಂದನ್ನು ಹೊರತುಪಡಿಸಿ ಬೇರೆ ಯಾವ ರಾಜ್ಯಗಳ ರಾಜಕೀಯದಲ್ಲಿಯೂ ದಲಿತರು ನಿರ್ಣಾಯಕ ಸ್ಥಾನದಲ್ಲಿ ಇಲ್ಲ.
ಇವೆಲ್ಲವನ್ನು ಮೊದಲೇ ತಿಳಿದುಕೊಂಡಿದ್ದ ಪ್ರವಾದಿಯಂತೆ ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಮಾತನಾಡಿದ್ದರು. 

1952ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷವೊಂದನ್ನು ಕಟ್ಟಿ ಚುನಾವಣೆ ಎದುರಿಸಿದ ಅವರು ಜಲಂಧರ್ ನಡೆದ ಪ್ರಚಾರಸಭೆಯಲ್ಲಿ ದಲಿತ ರಾಜಕೀಯದ ಭವಿಷ್ಯದ ಹೊಳಹುಗಳನ್ನು ನೀಡಿದ್ದರು. ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ದಲಿತರನ್ನು ಅವರು `ಕಾಂಗ್ರೆಸ್‌ನ ಗುಲಾಮರು` ಎಂದು ಚುಚ್ಚಿದ್ದರು. `ಬಹಳಷ್ಟು ಅಸ್ಪೃಶ್ಯರು ಕಾಂಗ್ರೆಸ್ ಟಿಕೆಟ್‌ನಿಂದ ಗೆದ್ದು ಲೋಕಸಭೆ ಪ್ರವೇಶಿಸಿದ್ದಾರೆ. 

ಅಂತಹ 30 ಸದಸ್ಯರಿದ್ದಾರೆ. ಇವರು ಎಂದಾದರೂ ಸದನದಲ್ಲಿ ಯಾವುದಾದರೂ ಪ್ರಶ್ನೆಗಳನ್ನು ಕೇಳಿದ್ದಾರೆಯೇ? ಯಾವುದಾದರೂ ಗೊತ್ತುವಳಿ ಇಲ್ಲವೇ ಮಸೂದೆಯನ್ನು ಮಂಡಿಸಿದ್ದಾರೆಯೇ? ತಮಗೆ ಅನಿಸಿದ್ದನ್ನು ಮುಲಾಜಿಲ್ಲದೆ ಹೇಳುವ ಧೈರ್ಯ ತೋರಿದ್ದಾರೆಯೇ? ಕಾಂಗ್ರೆಸ್ ಪಕ್ಷಕ್ಕೆ ಅರ್ಹ ದಲಿತರು ಬೇಕಾಗಿಲ್ಲ, ಗುಲಾಮರು ಬೇಕಾಗಿದೆ. ಇಂತಹ ಪಕ್ಷದ ಗುಲಾಮರು ದಲಿತರ ಪ್ರತಿನಿಧಿಗಳು ಹೇಗಾಗುತ್ತಾರೆ?` ಎಂದು ಅವರು ಪ್ರಶ್ನಿಸಿದ್ದರು. 

ಸ್ವಾತಂತ್ರ್ಯಾನಂತರದ ಭಾರತದಲ್ಲಿ ರಾಜಕೀಯವಾಗಿ ದಲಿತರ ಸ್ಥಿತಿ ಏನಾಗಲಿದೆ ಎಂಬ ಸ್ಪಷ್ಟ ಅರಿವು ಅಂಬೇಡ್ಕರ್ ಅವರಿಗಿತ್ತು. ಅದಕ್ಕಾಗಿಯೇ ಅವರು `ದಲಿತ ಪ್ರತಿನಿಧಿಗಳನ್ನು ದಲಿತ ಮತದಾರರೇ ಆಯ್ಕೆ ಮಾಡುವಂತಹ ಪ್ರತ್ಯೇಕ ಮತದಾನದ ಹಕ್ಕನ್ನು ನೀಡುವಂತೆ ದುಂಡುಮೇಜಿನ ಪರಿಷತ್‌ನಲ್ಲಿ ವಾದಿಸಿದ್ದರು. ದಲಿತ ಮತದಾರರು ಉಳಿದೆಲ್ಲರ ಜತೆಯಲ್ಲಿ ಸೇರಿ ಸಾಮಾನ್ಯ ಅಭ್ಯರ್ಥಿಗೆ ಮತದಾನ ಮಾಡುವ ಜತೆಯಲ್ಲಿ, ಕೇವಲ ತಮ್ಮ ಮತದಿಂದಲೇ ದಲಿತ ಅಭ್ಯರ್ಥಿಯನ್ನು ಚುನಾಯಿಸುವ ಅಧಿಕಾರವೂ ಇರಬೇಕು.
 
ಇಲ್ಲದೆ ಹೋದರೆ ದಲಿತ ಜನಪ್ರತಿನಿಧಿಗಳು ರಾಜಕೀಯ ಪಕ್ಷಗಳ ಗುಲಾಮರಾಗುತ್ತಾರೆ` ಎಂದು ಅವರು ಪ್ರತಿಪಾದಿಸಿದ್ದರು. ಕೊನೆಗೂ ಬ್ರಿಟಿಷ್ ಪ್ರಧಾನಿ ರಾಮ್ಸೆ ಮ್ಯಾಕ್‌ಡೊನಾಲ್ಡ್ ಅಂಬೇಡ್ಕರ್ ಅಭಿಪ್ರಾಯವನ್ನು ಒಪ್ಪಿಕೊಂಡರೂ ಗಾಂಧೀಜಿಯವರ ವಿರೋಧದಿಂದಾಗಿ ಅದು ಕಾರ್ಯರೂಪಕ್ಕೆ ಬರಲಿಲ್ಲ. 

ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕು ನೀಡುವುದನ್ನು ವಿರೋಧಿಸಿ ಗಾಂಧೀಜಿ ಪ್ರಾರಂಭಿಸಿದ್ದ ಆಮರಣಾಂತ ಉಪವಾಸಕ್ಕೆ ಮಣಿದ ಅಂಬೇಡ್ಕರ್ ಒಲ್ಲದ ಮನಸ್ಸಿನಿಂದಲೇ ತಮ್ಮ ಬೇಡಿಕೆಯನ್ನು ಕೈಬಿಟ್ಟು `ಪೂನಾ ಒಪ್ಪಂದ`ಕ್ಕೆ ಸಹಿ ಹಾಕಿದ್ದರು. ಇದರ ಪರಿಣಾಮ ತಿಳಿದುಕೊಳ್ಳಲು ಬಹಳ ಕಾಲವೇನೂ ಬೇಕಾಗಲಿಲ್ಲ. ಸ್ವತಂತ್ರಭಾರತದಲ್ಲಿ ಸ್ವಂತ ಪಕ್ಷ ಕಟ್ಟಿ ಸ್ಪರ್ಧಿಸಿದ್ದ ಎರಡೂ ಚುನಾವಣೆಗಳಲ್ಲಿ ಅಂಬೇಡ್ಕರ್ ಸೋಲಬೇಕಾಯಿತು. 

ಈಗಲಾದರೂ ಪರಿಸ್ಥಿತಿ ಬದಲಾಗಿದೆಯೇ? ಬೇರೆಬೇರೆ ರಾಜ್ಯಗಳಲ್ಲಿ ದಲಿತ ಸಮುದಾಯಕ್ಕೆ ಸೇರಿರುವ ಐದು ಮಂದಿ ಮುಖ್ಯಮಂತ್ರಿಗಳಾದರೂ ಅವರಲ್ಲಿ ನಾಲ್ಕು ಮಂದಿ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳು. ಅವರೆಲ್ಲ ಮುಖ್ಯಮಂತ್ರಿಯಾಗಿದ್ದು ಸ್ವಂತ ಬಲದಿಂದ ಅಲ್ಲ, ಕಾಂಗ್ರೆಸ್ ಬೆಂಬಲದಿಂದ. ಇದಕ್ಕೆ ಹೊರತಾದವರೆಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮಾಯಾವತಿಯವರೊಬ್ಬರೇ. 

ಈ ಕಾರಣದಿಂದಲೇ ದಲಿತ ರಾಜಕೀಯದ ಯಶಸ್ವಿ ಮಾದರಿ -ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ್ದು ಮಾತ್ರ. ಕಳೆದ ಚುನಾವಣೆಯಲ್ಲಿ ಬಿಎಸ್‌ಪಿ ಪರಾಭವಗೊಂಡಿದ್ದರೂ ತಳ್ಳಿಹಾಕಿ ಬಿಡುವಂತಹ ಪಕ್ಷ ಅದಲ್ಲ ಎನ್ನುವುದು ಅದರ ಬೆಳವಣಿಗೆಯನ್ನು ಗಮನಿಸುತ್ತ ಬಂದವರಿಗೆಲ್ಲರಿಗೂ ಗೊತ್ತು. ಅದರ ಈ ಶಕ್ತಿಯನ್ನು ತಿಳಿದುಕೊಳ್ಳಬೇಕಾದರೆ  ಆ ಪಕ್ಷದ ಸ್ಥಾಪಕರಾದ ಕಾನ್ಸಿರಾಮ್ ಅವರನ್ನು ಮೊದಲು ಅರ್ಥಮಾಡಿಕೊಳ್ಳಬೇಕು. 

ಅಂಬೇಡ್ಕರ್ ಅವರ ನಂತರದ ಬಹುಮುಖ್ಯ ದಲಿತ ರಾಜಕೀಯ ನಾಯಕ ಕಾನ್ಸಿರಾಮ್ ಎನ್ನುವುದರಲ್ಲಿ ಅನುಮಾನ ಇಲ್ಲ. ವಿದ್ಯೆಯಲ್ಲಿಯಾಗಲಿ, ವಿದ್ವತ್‌ನಲ್ಲಿಯಾಗಲಿ  ಅಂಬೇಡ್ಕರ್ ಅವರಿಗೆ ಕಾನ್ಸಿರಾಮ್ ಸಮ ಅಲ್ಲ. ಆದರೆ ರಾಜಕೀಯವಾಗಿ ಅಂಬೇಡ್ಕರ್ ಅವರಿಗಿಂತಲೂ ಕಾನ್ಸಿರಾಮ್ ಯಶಸ್ವಿ ರಾಜಕಾರಣಿ.

1918ರಿಂದ 1930ರ ವರೆಗಿನ ಅಂಬೇಡ್ಕರ್ ಅವರ ಜೀವನದ ಮೊದಲ ಘಟ್ಟದಲ್ಲಿ ಬಹಿಷ್ಕೃತ ಹಿತಕರಣೆ ಸಭಾ ಸ್ಥಾಪನೆ, ಮಹಾಡ್ ಸತ್ಯಾಗ್ರಹ, ಪೂನಾದ ಪಾರ್ವತಿ ದೇವಸ್ಥಾನ ಮತ್ತು ನಾಸಿಕ ಕಾಳಾರಾಮ ದೇವಸ್ಥಾನ ಪ್ರವೇಶ ಹೋರಾಟಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಚಳವಳಿಯನ್ನು ಮುನ್ನಡೆಸಿದ್ದ ಅಂಬೇಡ್ಕರ್, ನಂತರ 1930ರಿಂದ 1951ರ ವರೆಗಿನ ಅವಧಿಯಲ್ಲಿ ತಮ್ಮನ್ನು ರಾಜಕೀಯವಾಗಿ ತೊಡಗಿಸಿಕೊಂಡಿದ್ದರು. 

ಈ ಅವಧಿಯಲ್ಲಿ ಸ್ವತಂತ್ರ ಕಾರ್ಮಿಕ ಪಕ್ಷ, ಪರಿಶಿಷ್ಟ ಜಾತಿ ಒಕ್ಕೂಟ ಮತ್ತು ಭಾರತೀಯ ರಿಪಬ್ಲಿಕನ್ ಪಕ್ಷ ಎಂಬ ಮೂರು ರಾಜಕೀಯ ಪಕ್ಷಗಳನ್ನೂ ಅವರು ಕಟ್ಟಿದ್ದರು. ಆದರೆ ಅಂಬೇಡ್ಕರ್ ಅವರಿಗೆ ರಾಜಕೀಯ ಯಶಸ್ಸು ಸಿಗಲೇ ಇಲ್ಲ. ಈ ವೈಫಲ್ಯಕ್ಕೆ ಅಂಬೇಡ್ಕರ್ ಅವರ ಕಡು ಸೈದ್ಧಾಂತಿಕ ನಿಷ್ಠೆ ಮತ್ತು ದಲಿತ ಕೇಂದ್ರಿತ ರಾಜಕಾರಣದ ಮಿತಿಯೂ ಕಾರಣವಾಗಿರಬಹುದು. ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳಬೇಕಾದರೆ ಕಾನ್ಸಿರಾಮ್ ರಾಜಕಾರಣವನ್ನು ಇನ್ನಷ್ಟು ಒಳಹೊಕ್ಕು ನೋಡಬೇಕಾಗುತ್ತದೆ.

ಶುದ್ಧ ಸೈದ್ಧಾಂತಿಕ ರಾಜಕಾರಣದ ಬಗ್ಗೆ ಕಾನ್ಸಿರಾಮ್ ಅವರಿಗೆ ನಂಬಿಕೆ ಇರಲಿಲ್ಲ ಎಂದು ಹೇಳಲಾಗದು. ಆದರೆ ಅದರ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಿದ್ದದ್ದು ಕಡಿಮೆ. ಅವರದ್ದು ವಾಸ್ತವದ ನೆಲೆಗಟ್ಟಿನ ರಾಜಕಾರಣ. ಈ ಮೂಲಕ ಅವರು ದಲಿತರು ಮತ್ತು ಬಹುಜನರ ನಡುವಿನ ಸಂಬಂಧದ ವ್ಯಾಕರಣವನ್ನೇ ಬದಲಿಸಿದ್ದರು. ಜೀವನದ ಪ್ರಾರಂಭದ ದಿನಗಳಲ್ಲಿ ಅವರು ಮಹಾರಾಷ್ಟ್ರದಲ್ಲಿ ಒಂದಷ್ಟು ಕಾಲ ಭಾರತೀಯ ರಿಪಬ್ಲಿಕನ್ ಪಕ್ಷದ (ಆರ್‌ಪಿಐ) ಜತೆಯಿದ್ದರೂ ಆ ಪಕ್ಷದ ದಲಿತ ಕೇಂದ್ರಿತ ರಾಜಕಾರಣವನ್ನು ಇಷ್ಟಪಡುತ್ತಿರಲಿಲ್ಲ.
 
ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯ `ಬಹುಜನ ಸಮಾಜ`ದ ಭಾಗವೆಂದೇ ಅವರು ಹೇಳುತ್ತಿದ್ದರು. ಇದರಿಂದಾಗಿ ಅವರು ಪ್ರಾರಂಭದಲ್ಲಿ ಕಟ್ಟಿದ `ಅಖಿಲ ಭಾರತ ಹಿಂದುಳಿದ (ಎಸ್‌ಸಿ, ಎಸ್‌ಟಿ, ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟ` (ಬಿಎಎಂಸಿಇಎಫ್) ವಾಗಲಿ, ಅದರ ನಂತರ ಸ್ಥಾಪಿಸಿದ್ದ `ದಲಿತ್ ಶೋಷಿತ್ ಸಮಾಜ್ ಸಂಘರ್ಷ ಸಮಿತಿ, ಇಲ್ಲವೇ ಡಿಎಸ್-4 ಆಗಲಿ ಕೊನೆಗೆ ಸ್ಥಾಪಿಸಿದ ಬಹುಜನ ಸಮಾಜ ಪಕ್ಷವಾಗಲಿ (ಬಿಎಸ್‌ಪಿ) ಕೇವಲ ದಲಿತ ಕೇಂದ್ರಿತ ಸಂಘಟನೆಗಳಾಗಿರಲಿಲ್ಲ. 

ಮೀಸಲಾತಿಯ ಕಾರಣದಿಂದಾಗಿ ಎಷ್ಟೋ ಕಡೆ ಹಿಂದುಳಿದ ಜಾತಿಗಳಿಗಿಂತ ದಲಿತರು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ಅವರು ತಮ್ಮ ಭಾಷಣಗಳಲ್ಲಿ ಹೇಳುತ್ತಿದ್ದರು.  ಬಿಎಸ್‌ಪಿಯ ಬ್ಯಾನರ್, ಪೋಸ್ಟರ್ ಇಲ್ಲವೇ ಲೆಟರ್‌ಹೆಡ್‌ಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಅವರ ಜತೆಯಲ್ಲಿ ಜ್ಯೋತಿಬಾ ಪುಲೆ, ಸಾಹು ಮಹಾರಾಜ್, ಪೆರಿಯಾರ್ ಮತ್ತು ನಾರಾಯಣ ಗುರುಗಳ ಭಾವಚಿತ್ರ ಅಚ್ಚುಹಾಕಿಸುವುದನ್ನು ಅವರು ಕಡ್ಡಾಯಗೊಳಿಸಿದ್ದರು.

1995ರಲ್ಲಿ ಮುಖ್ಯಮಂತ್ರಿಯಾದ ಮಾಯಾವತಿ ತಮ್ಮ ಬಜೆಟ್‌ನ ಶೇಕಡಾ 27ರಷ್ಟು ಹಣವನ್ನು ಹಿಂದುಳಿದ ಜಾತಿಗಳಿಗೆ ಮೀಸಲಿಟ್ಟಿದ್ದರು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಎಲ್ಲ ಸೌಲಭ್ಯಗಳನ್ನು ಮುಸ್ಲಿಮ್ ವಿದ್ಯಾರ್ಥಿಗಳಿಗೂ ವಿಸ್ತರಿಸಿದ್ದರು. ಸರ್ಕಾರಿ ನೌಕರಿಗಳಲ್ಲಿ ಮುಸ್ಲಿಮರಲ್ಲಿರುವ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ನೀಡಬೇಕೆಂಬ ಉತ್ತರಪ್ರದೇಶ ಹಿಂದುಳಿದ ಜಾತಿಗಳ ಒಕ್ಕೂಟದ ವರದಿಯನ್ನು ಮಾಯಾವತಿ ಜಾರಿಗೊಳಿಸಿದ್ದರು. 

ಹಿಂದುಳಿದ ಜಾತಿಗಳ ಶೇಕಡಾ 27ರ ಮೀಸಲಾತಿಯಲ್ಲಿ ಶೇಕಡಾ ಎಂಟರಷ್ಟನ್ನು ಮುಸ್ಲಿಮರಲ್ಲಿನ ಹಿಂದುಳಿದ ಜಾತಿಗಳಿಗೆ ನೀಡಿದ್ದರು. 1996ರ ವಿಧಾನಸಭಾ ಚುನಾವಣೆಯಲ್ಲಿನ ಬಿಎಸ್‌ಪಿ ಅಭ್ಯರ್ಥಿಗಳಲ್ಲಿ ಶೇಕಡಾ 29ರಷ್ಟು ಮಾತ್ರ ಪರಿಶಿಷ್ಟ ಜಾತಿಗೆ ಸೇರಿದವರಿದ್ದರು. ಉಳಿದಂತೆ ಶೇಕಡಾ 34ರಷ್ಟು ಹಿಂದುಳಿದ ಜಾತಿಗಳು, ಶೇಕಡಾ 18ರಷ್ಟು ಮುಸ್ಲಿಮರಿದ್ದರು. 

ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಬಿಎಸ್‌ಪಿಯಲ್ಲಿ ಮಾಯಾವತಿಯವರೇ ಎಲ್ಲವೂ ಆಗಿದ್ದರೂ ಪಕ್ಷದ ಪದಾಧಿಕಾರಗಳನ್ನು ಜಾತಿಜನಸಂಖ್ಯೆಗೆ ಅನುಗುಣವಾಗಿ ನೀಡುತ್ತಾ ಬಂದಿದ್ದಾರೆ. ಹಿಂದುಳಿದ ಜಾತಿಗಳಲ್ಲಿ ಮುಖ್ಯವಾಗಿ ಅತೀ ಹಿಂದುಳಿದಿರುವ ನಿಷಾದ್, ಸೈನಿ, ಶಾಖ್ಯ, ಬಗೇಲ್, ಕಶ್ಯಪ್ ಮತ್ತು ರಾಜ್‌ಭರ್ ಸಮುದಾಯಕ್ಕೆ ಬಿಎಸ್‌ಪಿಯಲ್ಲಿ ಈಗಲೂ ಹೆಚ್ಚಿನ ಪ್ರಾತಿನಿಧ್ಯ ಇದೆ.

ವಿಧಾನಸಭೆ ನಮ್ಮ ಸುತ್ತಲಿನ ಸಮಾಜದ ರಚನೆಯನ್ನು ಪ್ರತಿಬಿಂಬಿಸುವಂತಿರಬೇಕು ಎನ್ನುವುದು ಕಾನ್ಸಿರಾಮ್ ಅವರ ಚಿಂತನೆಯಾಗಿತ್ತು. ಈ ಕಾರಣದಿಂದಾಗಿಯೇ ಮೇಲ್ಜಾತಿಯೂ ಸೇರಿದಂತೆ ಎಲ್ಲರಿಗೂ ಅವರ ಜಾತಿ ಜನಸಂಖ್ಯೆಯ ಆಧಾರದಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಅವರು ಹೇಳುತ್ತಿದ್ದದ್ದು ಮಾತ್ರವಲ್ಲ, 2002ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಹೇಳಿದಂತೆ ಮಾಡಿಯೂ ತೋರಿಸಿದ್ದರು. ನಂತರದ ದಿನಗಳಲ್ಲಿ ಮಾಯಾವತಿಯವರೂ ಆ ಸೂತ್ರವನ್ನು ಪಾಲಿಸಿಕೊಂಡು ಬಂದಿದ್ದಾರೆ. 

ಮಾಯಾವತಿಯವರೂ ಸೇರಿದಂತೆ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದ ಮೊದಲ ಚುನಾವಣೆಯಿಂದ ಸ್ವಂತ ಬಲದಿಂದ ಸರ್ಕಾರ ರಚಿಸುವಷ್ಟು ಬಹುಮತ ಗಳಿಸಿದ್ದ 2007ರ ಚುನಾವಣೆಯ ವರೆಗೆ ಬಿಎಸ್‌ಪಿ ಸಾಗಿ ಬಂದ ಹಾದಿಯನ್ನು ನೋಡುತ್ತಾ ಬಂದರೆ ಉದ್ದಕ್ಕೂ ಈ ರೀತಿ ತನ್ನ ನೆಲೆಯನ್ನು ವಿಸ್ತರಿಸುತ್ತಾ ಬಂದಿರುವುದನ್ನು ಕಾಣಬಹುದು. 

ಬಿಜೆಪಿ ಜತೆಗಿನ ಮೈತ್ರಿ, `ಬ್ರಾಹ್ಮಣ್ ಜೋಡೋ`-ಎಲ್ಲವೂ ಈ ಕಾರ್ಯತಂತ್ರದ ಭಾಗವೇ ಆಗಿತ್ತು. ಇದರಿಂದ ಬಿಎಸ್‌ಪಿ ಗಳಿಸಿದ್ದು ಹೆಚ್ಚು ಕಳೆದುಕೊಂಡದ್ದು ಬಹಳ ಕಡಿಮೆ. ಈ ಬಾರಿಯ ಚುನಾವಣೆಯಲ್ಲಿಯೂ ಬಿಎಸ್‌ಪಿ ಸೋಲಿಗೆ ಗೆಲುವಿನ ಮದದಿಂದ ನಡೆಸಿದ ವೈಯಕ್ತಿಕ ಹುಚ್ಚಾಟಗಳೇ ಕಾರಣ ಹೊರತು, ಅದರ ರಾಜಕೀಯ ಕಾರ್ಯತಂತ್ರದ ವೈಫಲ್ಯ ಅಲ್ಲ. 

ಇದರಿಂದಾಗಿಯೇ ರಾಜಕೀಯ ಪಕ್ಷಗಳ ಗುಲಾಮಗಿರಿಯಿಂದ ಹೊರತಾದ ಸ್ವತಂತ್ರ ಮತ್ತು ಸ್ವಾಭಿಮಾನಿ ದಲಿತ ರಾಜಕಾರಣಕ್ಕೆ ಅಂಬೇಡ್ಕರ್ ಪ್ರೇರಣೆ ಒದಗಿಸಬಹುದು, ಆದರೆ ಮಾದರಿಯಾಗಿ ಕಾನ್ಸಿರಾಮ್ ಅವರನ್ನೇ ಸ್ವೀಕರಿಸಬೇಕಾಗುತ್ತದೆ.

ಕಮರಿಹೋದ ಅಣ್ಣಾ ಚಳವಳಿ ಎಂಬ ಕನಸು April 09, 2012


ಭ್ರಷ್ಟಾಚಾರ ವಿರೋಧಿಸಿ ನಡೆದ ದೇಶದ ಮೂರನೇ ಹೋರಾಟದ ಗರ್ಭಪಾತವಾಗಿದೆ. ಎಪ್ಪತ್ತರ ದಶಕದ ಪ್ರಾರಂಭದಲ್ಲಿ ಜಯಪ್ರಕಾಶ್ ನಾರಾಯಣ್ ಮತ್ತು ಎಂಬತ್ತರ ದಶಕದ ಕೊನೆಯ ಭಾಗದಲ್ಲಿ ವಿಶ್ವನಾಥ್ ಪ್ರತಾಪ್ ಸಿಂಗ್ ನೇತೃತ್ವದಲ್ಲಿ ನಡೆದ ಚಳವಳಿಗಳು ಕೂಡಾ  ಭ್ರಷ್ಟಾಚಾರ ನಿರ್ಮೂಲನೆಯ ಗುರಿಯನ್ನೇ ಹೊಂದಿದ್ದವು.

ಆ ಎರಡೂ ಚಳವಳಿಗಳು ಅಂತಿಮವಾಗಿ ಚುನಾವಣೆಯಲ್ಲಿ ಭ್ರಷ್ಟರ ಸೋಲಿನ ಮೂಲಕ ಸತ್ತೆಯ ಬದಲಾವಣೆಯಲ್ಲಿ ಕೊನೆಗೊಂಡಿದ್ದವು. ತನ್ನ ನೇತೃತ್ವದ ಚಳವಳಿಗೆ ವರ್ಷ ತುಂಬಿದ ಸಂದರ್ಭದಲ್ಲಿ ಮಾತನಾಡಿರುವ ಅಣ್ಣಾ ಹಜಾರೆ ಅವರೂ ಮುಂದಿನ ಲೋಕಸಭಾ ಚುನಾವಣೆಯ ಕಾಲದಲ್ಲಿ ನಿರ್ಣಾಯಕ ಹೋರಾಟ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

ಆದರೆ, ಹಿಂದಿನ ಎರಡು ಭ್ರಷ್ಟಾಚಾರ ವಿರೋಧಿ ಚಳವಳಿಗಳ ಜತೆ ಕೆಲವು ಅತ್ಯುತ್ಸಾಹಿಗಳು ಹೋಲಿಸುತ್ತಾ ಬಂದ ಅಣ್ಣಾ ಹಜಾರೆ ಚಳವಳಿ ಮುಂದೆ ಹೆಜ್ಜೆ ಇಡಲಾಗದೆ ನಡು ಹಾದಿಯಲ್ಲಿಯೇ ಏದುಸಿರು ಬಿಡುತ್ತಿರುವುದನ್ನು ನೋಡಿದರೆ ಬಹಳ ದೂರ ಸಾಗುವ ಸಾಧ್ಯತೆಗಳು ಕಾಣುತ್ತಿಲ್ಲ.

ಕಳೆದ ವರ್ಷದ ಏಪ್ರಿಲ್ ಐದರಂದು ದೇಶಕ್ಕೆ ಅಷ್ಟೇನೂ ಪರಿಚಿತರಲ್ಲದ ಅಣ್ಣಾ ಹಜಾರೆ ಅವರು ದೆಹಲಿಯ ಜಂತರ್ ಮಂತರ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದಾಗ ಹರಿದುಬಂದ ಜನಬೆಂಬಲವನ್ನು ಮುಗ್ಧ ಕಣ್ಣುಗಳಿಂದ ನೋಡಿದವರಲ್ಲಿ ಹೆಚ್ಚಿನವರು ಆಗಲೇ ಲೋಕಪಾಲರ ನೇಮಕವಾಗಿಯೇ ಬಿಟ್ಟಿತು ಎಂಬ ಸಂಭ್ರಮದಲ್ಲಿದ್ದರು.

ಒಂದು ವರ್ಷ ಕಳೆದ ಮೇಲೂ ಲೋಕಪಾಲರ ನೇಮಕದ ಮಸೂದೆಯನ್ನು ಸಂಸತ್ ಅಂಗೀಕರಿಸಿಲ್ಲ, ಅದಕ್ಕೆ ಅಂಗೀಕಾರ ದೊರೆಯುವ ಭರವಸೆಯೂ ಇಲ್ಲ. ಸದ್ಯಕ್ಕೆ ಇದು ಮುಗಿದ ಅಧ್ಯಾಯ.

ಇದನ್ನು ಇನ್ನೊಂದು `ಸ್ವಾತಂತ್ರ್ಯ ಹೋರಾಟ` ಎಂದು ಬಣ್ಣಿಸುತ್ತಾ ಅರಬ್ ರಾಷ್ಟ್ರಗಳಲ್ಲಿ ನಡೆದ ಕ್ರಾಂತಿ ಇಲ್ಲಿಯೂ ನಡೆದೇ ಬಿಟ್ಟಿತು ಎಂಬ ಭ್ರಮೆಯನ್ನು ಸೃಷ್ಟಿಸಿದ್ದ ಮಾಧ್ಯಮಗಳು, ಮುಖ್ಯವಾಗಿ ಟಿವಿ ಚಾನೆಲ್‌ಗಳು, ಕೂಡಾ ಅಣ್ಣಾಹಜಾರೆ ಚಳವಳಿಯನ್ನು ಮರೆತುಬಿಟ್ಟಿವೆ. ವರ್ಷದ ಹಿಂದೆ ಹರಿದು ಬಂದ ಜನಸಾಗರ ಈಗ ಬೇಸಿಗೆಯ ಕಾಲದ ನದಿಯಂತಾಗಿದೆ.

ಅಣ್ಣಾ ಹಜಾರೆ ಉಪವಾಸ ಕೂತರೆ ಜಂತರ್‌ಮಂತರ್ ಮುಂದೆಯೇ ಜನಸೇರುತ್ತಿಲ್ಲ, ರಾಮಲೀಲಾ ಮೈದಾನವನ್ನು ತುಂಬುವುದು ಇನ್ನೂ ಕಷ್ಟ. ಸೋಷಿಯಲ್ ಮೀಡಿಯಾಗಳಲ್ಲಿ ಸಕ್ರಿಯರಾಗಿದ್ದವರು ಆಗಲೇ ಮೌನವಾಗಿದ್ದಾರೆ.

ಇವೆಲ್ಲವನ್ನೂ ನೋಡಿಯೋ ಏನೋ, ತಮ್ಮ ಬೇಡಿಕೆ ಈಡೇರಿಕೆಗೆ `ಒಂದು ದಿನ ಇಲ್ಲವೇ ಒಂದು ಗಂಟೆಯನ್ನೂ ಕೊಡಲಾರೆ` ಎಂದು ಗುಡುಗುತ್ತಿದ್ದ ಅಣ್ಣಾ ಹಜಾರೆ ಅವರು ಈಗ ಒಂದೂವರೆ ವರ್ಷಗಳ ದೀರ್ಘ ಗಡುವನ್ನು ನೀಡಿದ್ದಾರೆ.

ಜೆ.ಪಿ. ಮತ್ತು ವಿ.ಪಿ. ನೇತೃತ್ವದ ಚಳವಳಿಗಳ ಹರಹು ಮತ್ತು ತೀವ್ರತೆ ಗುರಿ ಮುಟ್ಟುವವರೆಗೆ ಹೆಚ್ಚಾಗುತ್ತಾ ಹೋಗಿತ್ತೇ ಹೊರತು ಕಡಿಮೆಯಾಗಿರಲಿಲ್ಲ. ಆದರೆ, ಅಣ್ಣಾ ಚಳವಳಿ ನಡುಹಾದಿಯಲ್ಲಿಯೇ ಸೊರಗಿಹೋಗುತ್ತಿದೆ. ಒಂದು ಚಳವಳಿಯ ಸೋಲು-ಗೆಲುವು ಅದರ ಉದ್ದೇಶ, ಸಂಘಟನೆಯ ಬಲ ಮತ್ತು ಹೋರಾಟದ ದಾರಿಯನ್ನು ಅವಲಂಬಿಸಿರುತ್ತದೆ.

ಭ್ರಷ್ಟಾಚಾರದ ನಿರ್ಮೂಲನೆಯ ಬಗ್ಗೆ ಅಣ್ಣಾ ಮತ್ತು ಅವರ ತಂಡದ ಸದಸ್ಯರು ಎಷ್ಟೇ ಭಾಷಣ ಮಾಡಿದರೂ ಉದ್ದೇಶವನ್ನು ಮಾತ್ರ ಲೋಕಪಾಲರ ನೇಮಕಕ್ಕೆ ಸೀಮಿತಗೊಳಿಸುತ್ತಾ ಬಂದಿದ್ದಾರೆ.

ಬಹುಮುಖ್ಯವಾದ ಚುನಾವಣಾ ಸುಧಾರಣೆ ಬಗ್ಗೆಯೂ ಅವರು ಹೆಚ್ಚು ಮಾತನಾಡುತ್ತಿಲ್ಲ. ಲೋಕಪಾಲರ ನೇಮಕವಾದ ಕೂಡಲೇ ಸಾರ್ವಜನಿಕ ಜೀವನದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆಯಾಗಿ ಬಿಡುತ್ತದೆ ಎಂಬ ಭ್ರಮೆ ಅವರಿಗೂ ಇರಲಾರದು. ಆದರೆ ಅವರ ಮಾತುಗಳು ಮಾತ್ರ ಆ ಭ್ರಮೆಯನ್ನು ಹುಟ್ಟಿಸುವ ರೀತಿಯಲ್ಲಿಯೇ ಇವೆ. ಇದು ಬಹಳ ಸರಳೀಕೃತ ಅಭಿಪ್ರಾಯ.

ತಾವು ತಿಳಿದುಕೊಂಡಿರುವ ಭ್ರಷ್ಟಾಚಾರದ ಅರ್ಥ ಏನು ಎಂಬುದನ್ನು ಅಣ್ಣಾ ತಂಡ ಈ ವರೆಗೆ ಬಿಡಿಸಿ ಹೇಳಿಲ್ಲ. ಭ್ರಷ್ಟಾಚಾರ ಎಂದರೆ ಕೇವಲ ಸಾರ್ವಜನಿಕ ಹಣದ ದುರುಪಯೋಗ ಇಲ್ಲವೇ ಹಣದ ಸೋರಿಕೆ ಮಾತ್ರವೇ? ತಾಲ್ಲೂಕು ಕಚೇರಿಯ ಗುಮಾಸ್ತ ಪಡೆಯುವ ಲಂಚ ಮತ್ತು  ರಕ್ಷಣಾ ಸಾಮಗ್ರಿಗಳ ಖರೀದಿಯಲ್ಲಿ ದಲ್ಲಾಳಿಗಳಿಂದ ಪಡೆಯುವ ಕಮಿಷನ್ ಎರಡನ್ನೂ ಒಂದೇ ಗುಂಪಿನಲ್ಲಿ ಸೇರಿಸಬಹುದೇ?

ಅಧಿಕಾರದ ದುರುಪಯೋಗ, ಸ್ವಜನ ಪಕ್ಷಪಾತ ಮತ್ತು ವಶೀಲಿ ಕೂಡಾ ಭ್ರಷ್ಟಾಚಾರದ ವ್ಯಾಪ್ತಿಗೆ ಬರುತ್ತವೆಯೇ? ಅಧಿಕಾರದ ದುರುಪಯೋಗವೂ ಭ್ರಷ್ಟಾಚಾರದ ವ್ಯಾಖ್ಯೆಯಲ್ಲಿ ಸೇರಿಕೊಳ್ಳುವುದಿದ್ದರೆ ಯಾವ ಅಧಿಕಾರ? ರಾಜಕಾರಣದ ಮೂಲಕ ಗಳಿಸಿದ್ದೇ ಇಲ್ಲವೇ ಶ್ರೇಣಿಕೃತ ಸಮಾಜ ಮತ್ತು ಆರ್ಥಿಕ ಅಸಮಾನತೆಯ ವ್ಯವಸ್ಥೆಯ ನೆರವಿನಿಂದ ಪಡೆದುಕೊಂಡದ್ದೇ?

ಭ್ರಷ್ಟಾಚಾರವನ್ನು ಕೇವಲ ಕಾನೂನಿನ ಮೂಲಕ ವ್ಯಾಖ್ಯಾನಿಸುವುದು ಸರಿಯೇ? ಅದನ್ನು ನೈತಿಕ ದೃಷ್ಟಿಯಿಂದಲೂ ನೋಡುವುದು ಬೇಡವೇ?- ಈ ಪ್ರಶ್ನೆಗಳಿಗೆ ಅಣ್ಣಾ ತಂಡದ ಸದಸ್ಯರಲ್ಲಿ ಉತ್ತರ ಇಲ್ಲ, ಹುಡುಕಲು ಹೋದರೆ ಸಿಗುವ ಉತ್ತರ ಚಳವಳಿಗೆ ಇನ್ನಷ್ಟು ಮುಜುಗರ ಉಂಟುಮಾಡಬಹುದು.

ಇದಕ್ಕಾಗಿ `ಮೊದಲು ಲೋಕಪಾಲರು ಬರಲಿ` ಎಂಬ ಮಂತ್ರವನ್ನಷ್ಟೇ ಅವರು ಪಠಿಸುತ್ತಿದ್ದಾರೆ. ಬಹುಮುಖಗಳ ರಕ್ಕಸನಂತೆ ಬೆಳೆಯುತ್ತಿರುವ ಭ್ರಷ್ಟಾಚಾರವನ್ನು ಕೇವಲ ಲೋಕಪಾಲರ ನೇಮಕದಿಂದ ನಾಶಮಾಡಬಹುದೆಂದು ಅಣ್ಣಾ ತಂಡ ಈಗಲೂ ತಿಳಿದುಕೊಂಡಿರುವುದೇ ಅವರ ಕಾಲಿನಡಿಯ ನೆಲ ಕುಸಿಯುತ್ತಿರುವುದಕ್ಕೆ ಕಾರಣ.

ಇನ್ನು ಸಂಘಟನೆ. ಚಳವಳಿಗೆ ಅಗತ್ಯವಾದ ಸಂಘಟನೆಯನ್ನು ಕಟ್ಟುವುದರಲ್ಲಿಯೂ ಅಣ್ಣಾ ತಂಡ ಸೋತಿದೆ. ಜಯಪ್ರಕಾಶ್ ನಾರಾಯಣ್ ಅವರ ಹೆಸರಿನ ಜತೆ ಸೇರಿಕೊಂಡಿರುವ ಎಪ್ಪತ್ತರ ದಶಕದ ನವನಿರ್ಮಾಣ ಚಳವಳಿ ಅವರಿಂದಲೇ ಪ್ರಾರಂಭವಾದುದಲ್ಲ. ಅದು ಭ್ರಷ್ಟಾಚಾರ ಇಲ್ಲವೇ ಸರ್ವಾಧಿಕಾರದ ವಿರುದ್ಧದ ಹೋರಾಟ ಆಗಿಯೂ ಪ್ರಾರಂಭವಾಗಿರಲಿಲ್ಲ.

ಅಹ್ಮದಾಬಾದ್‌ನ ಎಲ್.ಡಿ.ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಟೀನ್ ಬಿಲ್ ಹೆಚ್ಚಳದ ವಿರುದ್ದ 1973ರ ಡಿಸೆಂಬರ್‌ನಲ್ಲಿ ಪ್ರಾರಂಭಿಸಿದ ಸಣ್ಣಮಟ್ಟದ ಪ್ರತಿಭಟನೆ ಬೆಳೆಯುತ್ತಾ ಹೋಗಿ ನಂತರದ ದಿನಗಳಲ್ಲಿ ಸ್ವತಂತ್ರಭಾರತದ ಅತ್ಯಂತ ಬಲಿಷ್ಠ ರಾಜಕೀಯ ನಾಯಕಿ ಅಧಿಕಾರ ಕಳೆದುಕೊಳ್ಳುವುದಕ್ಕೆ ಕಾರಣವಾಯಿತು.

ಅಣ್ಣಾ ತಂಡದ ರೀತಿಯಲ್ಲಿ ಅಹ್ಮದಾಬಾದ್‌ನ ವಿದ್ಯಾರ್ಥಿಗಳಿಗೂ ತಮ್ಮ ಹೋರಾಟಕ್ಕೆ ವ್ಯಕ್ತವಾದ ಪ್ರತಿಕ್ರಿಯೆ ಅನಿರೀಕ್ಷಿತವಾಗಿತ್ತು. ಎಳೆಯರಾದರೂ ಪರಿಸ್ಥಿತಿಯನ್ನು ಬಹುಬೇಗ ಅರ್ಥಮಾಡಿಕೊಂಡ ವಿದ್ಯಾರ್ಥಿ ನಾಯಕರು ಒಂದೇ ತಿಂಗಳ ಅವಧಿಯಲ್ಲಿ ತಮ್ಮ ಹೋರಾಟಕ್ಕೆ ಸಾರ್ವಜನಿಕವಾದ ರೂಪ ಕೊಟ್ಟರು.

1973ರ ಜನವರಿಯಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಅಹ್ಮದಾಬಾದ್ ಬಂದ್‌ಗೆ ಕರೆಕೊಟ್ಟಾಗ ಅವರ ಮುಖ್ಯ ಘೋಷಣೆ ಬೆಲೆ ಏರಿಕೆ ವಿರುದ್ಧವಾಗಿತ್ತು, ಕ್ಯಾಂಟೀನ್ ಬಿಲ್ ಹೆಚ್ಚಳದ ವಿರುದ್ಧದ ಪ್ರತಿಭಟನೆ ನೇಪಥ್ಯಕ್ಕೆ ಸರಿದುಹೋಗಿತ್ತು.

ಎಪ್ಪತ್ತರ ದಶಕದ ಸಮಾಜ ಭ್ರಷ್ಟಾಚಾರ, ಬೆಲೆ ಏರಿಕೆ, ಆಹಾರ ಸಾಮಗ್ರಿಗಳ ಕೊರತೆ, ಸರ್ಕಾರಿ ನೌಕರರ ಸಂಬಳದ ಮೇಲೆ ಮಿತಿ ಹೇರಿಕೆ ಮೊದಲಾದ ಕಾರಣಗದಾಗಿ ಒಳಗಿಂದೊಳಗೆ ಕುದಿಯುತ್ತಿತ್ತು. ಅದು ಸಿಡಿಯಲು ಬೇಕಾದ ದಾರಿಯನ್ನಷ್ಟೇ ನವನಿರ್ಮಾಣ ಚಳವಳಿ ಮಾಡಿಕೊಟ್ಟಿತ್ತು.

ಅಣ್ಣಾ ಹಜಾರೆ ಉಪವಾಸ ಪ್ರಾರಂಭಿಸಿದಾಗ ದೇಶದಲ್ಲಿ ಎಪ್ಪತ್ತರ ದಶಕದ ಪರಿಸ್ಥಿತಿಯೇ ಇತ್ತು, ಈಗಲೂ ಇದೆ. ಒಂದಾದ ಮೇಲೆ ಒಂದರಂತೆ ಭ್ರಷ್ಟಾಚಾರದ ಹಗರಣಗಳು ಬಯಲಾಗತೊಡಗಿವೆ, ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿಹೋಗಿದ್ದಾರೆ, ಉದ್ಯೋಗದ ಅವಕಾಶಗಳು ಕಡಿಮೆಯಾಗತೊಡಗಿವೆ.

ಜನ ಎದುರಿಸುತ್ತಿರುವ ಈ ಎಲ್ಲ ಸಮಸ್ಯೆಗಳ ಗಂಗೋತ್ರಿ ಭ್ರಷ್ಟಾಚಾರದಲ್ಲಿಯೇ ಇದೆ. ಆದ್ದರಿಂದಲೇ ಅಣ್ಣಾ ಹಜಾರೆ ಚಳವಳಿಗೆ ಜನ ಪ್ರಾಮಾಣಿಕವಾಗಿಯೇ ಸ್ಪಂದಿಸಿದ್ದರು. ಆದರೆ, ಅದನ್ನು ಬಳಸಿಕೊಳ್ಳಲು ಚಳವಳಿಯ ನಾಯಕರು ಸೋತುಹೋದರು.

ನವನಿರ್ಮಾಣ ಚಳವಳಿಯ ನೇತೃತ್ವ ವಹಿಸಲು ಜೆಪಿ ಅಹ್ಮದಾಬಾದ್‌ಗೆ ಹೋಗಿದ್ದಾಗ ಆಗಲೇ ವಿದ್ಯಾರ್ಥಿ ಚಳವಳಿಗಾರರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಚಿಮಣ್ ಬಾಯ್ ಪಟೇಲ್ ಸರ್ಕಾರವನ್ನು ಪದಚ್ಯುತಿಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಮಾಡಿಬಿಟ್ಟಿದ್ದರು.

ಆ ಚಳವಳಿಗಾರರಿಗೆ ಜೆಪಿಯ ಅಗತ್ಯಕ್ಕಿಂತ ಹೆಚ್ಚಾಗಿ ಜೆಪಿಗೆ ಆ ಚಳವಳಿಯ ಅಗತ್ಯ ಇತ್ತು.  `ನಾನು ಎರಡು ವರ್ಷಗಳ ಕಾಲ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ಸಹಮತ ಮೂಡಿಸಲು ಪ್ರಯತ್ನಪಟ್ಟು ಸೋತುಹೋಗಿದ್ದೆ.

ಆಗ ನನ್ನ ಕಣ್ಣಿಗೆ ಬಿದ್ದ ಗುಜರಾತ್ ವಿದ್ಯಾರ್ಥಿಗಳು ನನಗೆ ದಾರಿ ತೋರಿಸಿದ್ದರು` ಎಂದು ಜೆಪಿಯವರೇ ವಿನಯಪೂರ್ವಕವಾಗಿ ಬರೆದುಕೊಂಡಿದ್ದಾರೆ. `ಅಣ್ಣಾ ಹಜಾರೆ ಅವರು ಸಂಸತ್‌ಗಿಂತಲೂ ಮೇಲು` ಎಂಬ ಅರವಿಂದ ಕೇಜ್ರಿವಾಲ್ ಅವರ ಮೂರ್ಖ ಹೇಳಿಕೆ ನೆನಪಾಗುತ್ತಿದೆಯೇ?

 ಒಂದು ಚಳವಳಿ ಯಶಸ್ವಿಯಾಗಬೇಕಾದರೆ ಅದರ ನೇತೃತ್ವ ವಹಿಸುವ ಸಂಘಟನೆಯ ಮೇಲೆ ಸಾಮಾನ್ಯ ಜನರಿಗೂ ನಂಬಿಕೆ ಇರಬೇಕಾಗುತ್ತದೆ. ಅಣ್ಣಾ ತಂಡದ ನಡೆ ಮೊದಲ ದಿನದಿಂದಲೇ ನಿಗೂಢವಾಗಿತ್ತು. ಪ್ರಾರಂಭದಲ್ಲಿಯೇ ಬೇರೆಬೇರೆ ಕಾರಣಗಳಿಗಾಗಿ ಅಲ್ಲಿಂದ ಹೊರನಡೆದವರು ಯೋಗಗುರು ರಾಮ್‌ದೇವ್; ನಂತರ ಸ್ವಾಮಿ ಅಗ್ನಿವೇಶ್, ರಾಜೀಂದರ್‌ಸಿಂಗ್, ವೇಣುಗೋಪಾಲ್ ಮೊದಲಾದವರು ಬಿಟ್ಟುಹೋದರು.

ಆಗಲೇ ಅಣ್ಣಾ ತಂಡದ ಉಳಿದ ಕೆಲವು ಸದಸ್ಯರ ಮೇಲೆ ಆರೋಪಗಳು ಕೇಳಿ ಬರತೊಡಗಿದ್ದವು. ಅದು ಮುಖ್ಯವಾಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ್ದವು. ಅಷ್ಟು ಹೊತ್ತಿಗೆ ಇಡೀ ದೇಶದಲ್ಲಿ ಚಳವಳಿ ಪಸರಿಸಿತ್ತು.

`ಜನ ಸ್ವಂತ ಇಚ್ಛೆಯಿಂದ ಬರುತ್ತಿದ್ದಾರೆ` ಎಂದು ಹೇಳಿಕೊಂಡರೂ ಜನ ಸೇರಿಸುವುದು, ಅದಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಜೋಡಿಸುವುದು, ಸಂಪನ್ಮೂಲ ಕ್ರೋಡೀಕರಿಸುವುದು ಸುಲಭದ ಕೆಲಸ ಅಲ್ಲ.

ನೋಡುನೋಡುತ್ತಿದ್ದಂತೆಯೇ ಭ್ರಷ್ಟ ರಾಜಕಾರಣಿಗಳು, ದುಷ್ಟ ಆಲೋಚನೆಯ ಉದ್ಯಮಿಗಳು, ಆಷಾಢಭೂತಿ ಧರ್ಮಗುರುಗಳು, ಶಿಕ್ಷಣದ ವ್ಯಾಪಾರಿಗಳು, ರೋಗಿಗಳನ್ನು ಸುಲಿಯುವ ವೈದ್ಯರು, ಕಕ್ಷಿದಾರರನ್ನು ಕಾಡಿಸುವ ವಕೀಲರು ಹೀಗೆ ಎಲ್ಲರೂ ಸೇರಿಕೊಳ್ಳತೊಡಗಿದ್ದರು.

ಯಾರು ಪ್ರಾಮಾಣಿಕರು, ಯಾರು ಭ್ರಷ್ಟರು? ಎನ್ನುವುದನ್ನು ಗುರುತಿಸಲಾಗದ ಅಯೋಮಯ ಸ್ಥಿತಿ. ಸೇರಿದವರಲ್ಲಿ ನಿಜವಾದ ಕಾಳಜಿ ಹೊಂದಿದ್ದವರು ಎಷ್ಟು ಮಂದಿ ಇದ್ದರೆನ್ನುವುದನ್ನು ಹುಡುಕುವುದೇ ಕಷ್ಟವಾಗಿತ್ತು. ಜೆಪಿ ಪ್ರವೇಶಕ್ಕೆ ಮುನ್ನವೇ ಗುಜರಾತ್‌ನಲ್ಲಿ ತಾರಕಕ್ಕೇರಿದ್ದ ನವನಿರ್ಮಾಣ ಚಳವಳಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 80 ಮಂದಿ ಪೊಲೀಸ್ ಗುಂಡೇಟಿನಿಂದ ಪ್ರಾಣ ಕಳೆದುಕೊಂಡಿದ್ದರು.

ಅಂತಹ ಒಂದು ಗೋಲಿಬಾರ್ ನಡೆದಿದ್ದರೆ ಸತ್ಯಾಗ್ರಹದ ಶಿಬಿರದಲ್ಲಿ ಎಷ್ಟು ಮಂದಿ ಉಳಿದುಕೊಳ್ಳುತ್ತಿದ್ದರೋ ಗೊತ್ತಿಲ್ಲ. ಅಣ್ಣಾ ಚಳವಳಿಗೆ ಏಟು ನೀಡಿದ್ದೇ ಅವರ ಸಂಘಟನೆಯ ಬಗ್ಗೆ ಸಾರ್ವಜನಿಕರಲ್ಲಿ ಹುಟ್ಟಿಕೊಳ್ಳತೊಡಗಿದ್ದ ಇಂತಹ ಗುಮಾನಿಗಳು.

ಇದನ್ನು ಇನ್ನಷ್ಟು ಬಲಪಡಿಸಿದ್ದು ಹರಿಯಾಣದ ಹಿಸ್ಸಾರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಅಣ್ಣಾ ತಂಡ ನಡೆಸಿದ್ದ ಪ್ರಚಾರ. ಅದರ ನಂತರ ನಡೆದ ಉತ್ತರಪ್ರದೇಶದ ಚುನಾವಣೆಯಲ್ಲಿ ಅಣ್ಣಾ ತಂಡದ ಸದಸ್ಯರನ್ನು ಯಾರೂ ಲೆಕ್ಕಕ್ಕೆ ಇಟ್ಟುಕೊಳ್ಳಲಿಲ್ಲ.

ಕೊನೆಯದಾಗಿ ಹೋರಾಟದ ದಾರಿ. ಉದ್ದೇಶ ಉದಾತ್ತವಾಗಿದ್ದರೂ ಸಂಘಟನೆ  ಬಲವಾಗಿದ್ದರೂ ಹೋರಾಟದ ದಾರಿಯಲ್ಲಿ ಎಡವಿದರೆ ಚಳವಳಿ ಗುರಿಮುಟ್ಟುವುದು ಕಷ್ಟ. ಉಪವಾಸ ಬಹಳ ಪರಿಣಾಮಕಾರಿ ಹೋರಾಟದ ಅಸ್ತ್ರ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಉಪವಾಸದ ಮೊದಲ ಉದ್ದೇಶ ಸ್ವಂತ ಆತ್ಮಾವಲೋಕನ, ಎರಡನೆಯದು, ಎದುರಾಳಿಯ ಆತ್ಮಪರಿವರ್ತನೆ.

ಈ ಉದ್ದೇಶಗಳಿಲ್ಲದ ಉಪವಾಸ `ಬ್ಲಾಕ್‌ಮೇಲ್` ಆಗುತ್ತದೆ. ಅದಕ್ಕಾಗಿಯೇ ಗಾಂಧೀಜಿಯವರು ಹದಿನಾರು ಬಾರಿ ಉಪವಾಸ ಮಾಡಿದ್ದರೂ ಆ ಅಸ್ತ್ರವನ್ನು ಅವರೆಂದೂ ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಹೋರಾಟಕ್ಕೆ ಬಳಸಿಕೊಳ್ಳಲಿಲ್ಲ. ಅವರು ಬಳಸಿದ್ದೆಲ್ಲವೂ ಆತ್ಮಶುದ್ಧಿ ಮತ್ತು ಆತ್ಮಪರಿವರ್ತನೆಗಾಗಿ.

ಉಪವಾಸದ ಮೂಲಕ ಉದ್ದೇಶ ಸಾಧಿಸುವುದಕ್ಕಿಂತ ಹೆಚ್ಚಾಗಿ ಹುತಾತ್ಮನಾಗುವ ಆಸೆಯೇ ಹೆಚ್ಚಿದೆಯೋ ಏನೋ ಎಂದು ಅನಿಸುವ ರೀತಿಯಲ್ಲಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹದ ಅಸ್ತ್ರವನ್ನು ಸದಾ ಝಳಪಿಸುತ್ತಿರುತ್ತಾರೆ.

ಆದರೆ ಆತ್ಮಾವಲೋಕನಕ್ಕೆ ಅವರು ತಯಾರಿಲ್ಲ, ಆತ್ಮಪರಿವರ್ತನೆಗೆ ತಮ್ಮನ್ನು ಒಡ್ಡಿಕೊಳ್ಳುವಷ್ಟು ಅಧಿಕಾರರೂಢರು ಸೂಕ್ಷ್ಮಮತಿಗಳಾಗಿಲ್ಲ. ಈ ಸ್ಥಿತಿಯಲ್ಲಿ ಉಪವಾಸ ಕೇವಲ `ಬ್ಲಾಕ್‌ಮೇಲ್` ಆಗುವ ಅಪಾಯ ಇದೆ.
ಕೊನೆಗೂ ಇದರ ಅರಿವು ಅಣ್ಣಾ ಹಜಾರೆ ಅವರಿಗೂ ಆಗುತ್ತಿದೆಯೇನೋ? ಇತ್ತೀಚೆಗೆ ಅವರು ಆತ್ಮಾವಲೋಕನದ ಧಾಟಿಯಲ್ಲಿ `ದೇಶ ಸುತ್ತಿ ಜನಜಾಗೃತಿಗೊಳಿಸುವ` ಮಾತುಗಳನ್ನಾಡುತ್ತಿದ್ದಾರೆ. ಜಂತರ್ ಮಂತರ್‌ಗೆ ಹೋಗುವ ಮೊದಲು ಈ ಕೆಲಸ ಮಾಡಿದ್ದರೆ ಅವರ ಕೈಗೆ ತಮ್ಮ ಕನಸುಗಳನ್ನೆಲ್ಲ ಕೊಟ್ಟವರು ಭಗ್ನಹೃದಯಿಗಳಾಗುತ್ತಿರಲಿಲ್ಲ.

Monday, April 2, 2012

`ಪವಿತ್ರ ಗೋಪೂಜೆ'ಯ ಮರೆಯಲ್ಲಿ ದೇಶದ್ರೋಹ' April 02, 2012

ನಮ್ಮಲ್ಲಿ ಕೆಲವು `ಪವಿತ್ರ ಗೋವು`ಗಳಿವೆ (`ಹೋಲಿ ಕೌ`). `ಅವಕ್ಕೆ ಹೊಡೆಯುವುದು ಬಡಿಯುವುದು ಬಿಡಿ, ಅವುಗಳತ್ತ ಸಂಶಯದ ಕಣ್ಣು ಕೂಡಾ ಹರಿಸಬಾರದು, ಅವುಗಳ ಪೂಜೆಯನ್ನಷ್ಟೇ ಮಾಡಬೇಕು` ಎಂದು ನಮ್ಮನ್ನು ಆಳುವವರು ಬಯಸುತ್ತಾರೆ.

ಪೂಜೆ ಮಾಡುವವ ಕಣ್ಣು ಯಾವಾಗಲೂ ಮುಚ್ಚಿರುತ್ತದೆ ಎಂದು ಅವರಿಗೂ ಗೊತ್ತಿರುತ್ತದೆ. ನಮ್ಮ ರಕ್ಷಣೆಗಾಗಿ ಇರುವ ಸೇನೆ, ಅದಕ್ಕೆ ನೆರವಾಗುವ ಗುಪ್ತಚರ ಇಲಾಖೆ, ಸಂವಿಧಾನದ ಅಂಗಗಳಲ್ಲಿ ಬಹುಮುಖ್ಯವಾದ ನ್ಯಾಯಾಂಗ, ರಾಷ್ಟ್ರಪತಿ ಹುದ್ದೆ... ಹೀಗೆ ಹಲವಾರು `ಪವಿತ್ರ ಗೋವು`ಗಳಿವೆ.

ಇವುಗಳ ವಿರುದ್ಧದ ಸಣ್ಣ ಆರೋಪ ಕೂಡಾ `ದೇಶದ್ರೋಹ` ಎಂದು ಬಣ್ಣಿಸಲಾಗುತ್ತದೆ. ಇದು ಆ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ. ಇದರಿಂದ ಅವುಗಳ ನೈತಿಕ ಸ್ಥೈರ್ಯ ಕುಸಿಯುತ್ತದೆ` ಎಂಬ ಬುದ್ಧಿ ಮಾತುಗಳನ್ನು ಹೇಳಲಾಗುತ್ತದೆ.

ಈ `ಪವಿತ್ರ ಗೋವು`ಗಳಲ್ಲಿ ಭಾರತೀಯ ಸೇನೆಗೆ ಅತ್ಯುನ್ನತ ಸ್ಥಾನ. ಅದು ಈಗ ಬೀದಿಗೆ ಇಳಿದು ಎಲ್ಲೆಂದರಲ್ಲಿ ನುಗ್ಗಿ ನಡೆಸುತ್ತಿರುವ ದಾಂಧಲೆಯಿಂದ ಸರ್ಕಾರ ತತ್ತರಗುಡುತ್ತಿದೆ. ಮನಮೋಹನ್ ಸಿಂಗ್ ಅವರ ಅತ್ಯಂತ ಪ್ರಾಮಾಣಿಕ ಸಹೋದ್ಯೋಗಿ ಎಂದು ಹೇಳಲಾಗುತ್ತಿದ್ದ ಎ.ಕೆ.ಆಂಟನಿ ಅವರೇ `ಆರೋಪಿ`ಯ ಕಟಕಟೆಯಲ್ಲಿ ನಿಲ್ಲುವಂತಾಗಿದೆ.

ನಮ್ಮ ಸಮರ ಸಿದ್ಧತೆಯಲ್ಲಿನ ಹುಳುಕುಗಳು ಬಯಲಾಗಿರುವುದರಿಂದ ವಿಶ್ವದ ಎರಡನೆಯದೋ ಮೂರನೆಯದೋ ದೊಡ್ಡ ಸೇನೆ ಎಂಬ ಕೀರ್ತಿ ಕಿರೀಟ ಕೂಡಾ ಉರುಳಿ ಬೀಳುವ ಸ್ಥಿತಿಯಲ್ಲಿದೆ. ಸೇನಾ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಎರಡು ಪ್ರಮುಖ ವಿಷಯಗಳನ್ನೆತ್ತಿದ್ದಾರೆ. ಮೊದಲನೆಯದು, ಸೇನಾ ಖರೀದಿಯಲ್ಲಿ ದಲ್ಲಾಳಿಗಳ ಪಾತ್ರ, ಎರಡನೆಯದು ದುರ್ಬಲಗೊಳ್ಳುತ್ತಿರುವ ರಕ್ಷಣಾ ವ್ಯವಸ್ಥೆ.

ಇಷ್ಟರವರೆಗೆ ಅವರು ಯಾಕೆ ಸುಮ್ಮನಿದ್ದರು? ಪ್ರಧಾನಿಗೆ ಬರೆದ ಪತ್ರ ಯಾಕೆ ಸೋರಿಹೋಯಿತು? ಎಂಬ ಪ್ರಶ್ನೆಗಳು ಪ್ರಸ್ತುತವಾದರೂ ಅದಕ್ಕಿಂತಲೂ ಮುಖ್ಯವಾದುದು ಅವರು ಎತ್ತಿರುವ ಎರಡು ಮೂಲಭೂತ ವಿಷಯಗಳು. ವಿವಾದ ಹೊರಡಿಸಿರುವ `ಸಂದೇಶ` ಆತ್ಮಾವಲೋಕನಕ್ಕೆ ದಾರಿ ಮಾಡಿಕೊಡಬೇಕಾಗಿತ್ತು.

ಆದರೆ, ಆಗುತ್ತಿರುವುದೇನು? `ಸಂದೇಶ`ವನ್ನು ಪಕ್ಕಕ್ಕಿಟ್ಟು `ಸಂದೇಶವಾಹಕ`ನ ತಲೆಯನ್ನೇ ಉರುಳಿಸುವ ಹುನ್ನಾರ.ರಾಜಕಾರಣದಲ್ಲಿರುವ ಯಾರಾದರೊಬ್ಬರು ಎದ್ದು ನಿಂತು ಎದೆ ಮೇಲೆ ಕೈ ಇಟ್ಟು ಜ.ಸಿಂಗ್ ಹೇಳಿರುವುದು ಸುಳ್ಳು ಎಂದು ಹೇಳಲು ಸಾಧ್ಯವೇ? ಭಾರತದ ರಕ್ಷಣಾ ಇಲಾಖೆಯ ಖರೀದಿಯಲ್ಲಿನ ಅವ್ಯವಹಾರಗಳು ಲೋಕಕ್ಕೆಲ್ಲ ಗೊತ್ತಿರುವ ಸಂಗತಿ. ಅದರಲ್ಲಿ ದಲ್ಲಾಳಿಗಳ ಪಾತ್ರ ಕೂಡಾ ಅಷ್ಟೇ ಜನಜನಿತ.

ಈ ದಲ್ಲಾಳಿಗಳ ಬಗ್ಗೆ ನಡೆದಷ್ಟು ಚರ್ಚೆ ನಮ್ಮ  ರಕ್ಷಣಾ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ನಡೆಯದೆ ಇದ್ದರೂ ಸೇನೆಯ ಉನ್ನತ ಮಟ್ಟದಲ್ಲಿ ಇದರ ಬಗ್ಗೆ ಆತಂಕ ವ್ಯಕ್ತವಾಗುತ್ತಲೇ ಇತ್ತು. ಇತ್ತೀಚೆಗಷ್ಟೆ ಕೇಂದ್ರ ಬಜೆಟ್ ಮಂಡಿಸಿದ ಪ್ರಣವ್ ಮುಖರ್ಜಿ `ರಕ್ಷಣಾ ಇಲಾಖೆಯ ವಾರ್ಷಿಕ ಅನುದಾನವನ್ನು 1,93,407 ಕೋಟಿ ರೂಪಾಯಿಗೆ ಹೆಚ್ಚಿಸಿದ್ದೇನೆ.

ಇದು  ಶೇ 18ರಷ್ಟು ಹೆಚ್ಚಳ` ಎಂದು ಬೀಗಿದ್ದರು. ಬಜೆಟ್ ಹಿಂದಿನ ದಿನವಷ್ಟೇ ಮಂಡಿಸಲಾದ ಆರ್ಥಿಕ ಸಮೀಕ್ಷೆಯ ಪುಟಗಳನ್ನು ತಿರುವಿ ಹಾಕಿದರೆ ಕಳೆದ ಬಜೆಟ್‌ನಲ್ಲಿ ನೀಡಲಾದ ಹಣದಲ್ಲಿ 3000 ಕೋಟಿ ರೂಪಾಯಿಗಳನ್ನು ಖರ್ಚುಮಾಡಲಾಗದೆ ಹಿಂತಿರುಗಿಸಿದ್ದ ವಿವರ ಕಣ್ಣಿಗೆ ರಾಚುತ್ತದೆ. ಕೊಟ್ಟ ಹಣವನ್ನು ಖರ್ಚು ಮಾಡದಿದ್ದರೆ ಯಾವ ಆಧುನೀಕರಣ ಸಾಧ್ಯ? ಜ.ಸಿಂಗ್ ಎತ್ತಿರುವುದು ಇದೇ ಪ್ರಶ್ನೆಯನ್ನು.

ರಕ್ಷಣಾ ಇಲಾಖೆಯ ಅಂತರಂಗದ ವ್ಯವಹಾರಗಳ ಬಗ್ಗೆ ಬೀದಿ ಚರ್ಚೆ ಪ್ರಾರಂಭವಾಗಿದ್ದು ಬೋಫೋರ್ಸ್ ಫಿರಂಗಿ ಖರೀದಿ ಹಗರಣದ ನಂತರದ ದಿನಗಳಲ್ಲಿ. ಬೋಪೋರ್ಸ್ ಜಗತ್ತಿನ ಅತ್ಯಂತ ಸಮರ್ಥ ಫಿರಂಗಿ ಎನ್ನಲಡ್ಡಿಯಿಲ್ಲ. ಇದರ ಸಮರ ಸಾಮರ್ಥ್ಯ ಸಾಬೀತಾಗಿದ್ದು ಕಾರ್ಗಿಲ್ ಯುದ್ಧ ಭೂಮಿಯಲ್ಲಾದರೂ, ಅದಕ್ಕಿಂತ ಹತ್ತು ವರ್ಷಗಳ ಹಿಂದೆಯೇ ಇದು ದೇಶದ ಈ ವರೆಗಿನ ಅತ್ಯಧಿಕ ಬಹುಮತ ಸರ್ಕಾರವನ್ನು ಉರುಳಿಸಿಬಿಟ್ಟಿತ್ತು.

ಅದಕ್ಕೆ ಬಲಿಯಾದ ಪ್ರಧಾನಿ ದೇಶದ ರಾಜಕೀಯವನ್ನು ಶುದ್ಧೀಕರಿಸುತ್ತೇನೆಂದು ಹೇಳುತ್ತಾ ಬಂದಿದ್ದ ರಾಜೀವ್‌ಗಾಂಧಿ. ದೆಹಲಿ ಹೈಕೋರ್ಟ್ ರಾಜೀವ್ ಗಾಂಧಿಯವರನ್ನು ದೋಷಮುಕ್ತಗೊಳಿಸಿದರೂ ಬೋಫೋರ್ಸ್ ಹಗರಣದಿಂದಾಗಿ ಹುಟ್ಟಿಕೊಂಡಿದ್ದ ಹಲವಾರು ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ.

 ಕಮಿಷನ್ ಸಂದಾಯವಾಗಿದ್ದು ನಿಜವಾದರೂ ಅದು ಯಾರಿಗೆ ಸಂದಾಯವಾಗಿದೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಆ ವ್ಯವಹಾರದಲ್ಲಿನ ಪ್ರಮುಖ ಆರೋಪಿ- ಇಟಲಿ ಮೂಲದ ಮತ್ತು ರಾಜೀವ್‌ಗಾಂಧಿ ಕುಟುಂಬದ ಸ್ನೇಹಿತ ಎನ್ನಲಾದ ಒಟ್ಟಾವಿಯೋ ಕ್ವಟ್ರೋಚಿ.

1993ರಲ್ಲಿ ಸಿಬಿಐ ಆತನ ವಿರುದ್ದ ಮೊಕದ್ದಮೆ ದಾಖಲಿಸಿದ್ದು ಗೊತ್ತಾದ ಮರುಕ್ಷಣ ಭಾರತ ಬಿಟ್ಟು ಪರಾರಿಯಾಗಿದ್ದ ಕ್ವಟ್ರೋಚಿಯನ್ನು ಕಳೆದ ಇಪ್ಪತ್ತೈದು ವರ್ಷಗಳ ಅವಧಿಯ ಯಾವ ಸರ್ಕಾರಕ್ಕೂ ಬಂಧಿಸಲಾಗಿಲ್ಲ.

ಸಿಬಿಐ ಕೋರಿಕೆ ಮೇರೆಗೆ ಲಂಡನ್‌ನಲ್ಲಿದ್ದ ಆತನ ಬ್ಯಾಂಕ್ ಖಾತೆಯನ್ನು ಅಮಾನತ್ತಿನಲ್ಲಿರಿಸಿದರೆ, ಸಿಬಿಐ ವಿರೋಧದ ಹೊರತಾಗಿಯೂ ಆಗಿನ ಕಾನೂನು ಸಚಿವರಾಗಿದ್ದ ಎಚ್.ಆರ್.ಭಾರದ್ವಾಜ್ ಅವರು ಕ್ವಟ್ರೋಚಿ ವಿರುದ್ಧದ ಯಾವ ಆರೋಪವೂ ಸಾಬೀತಾಗಿಲ್ಲ ಎಂದು ಹೇಳಿ ಬ್ಯಾಂಕ್ ಖಾತೆಯ ಚಲಾವಣೆಗೆ ಅನುಮತಿ ಕೊಟ್ಟಿದ್ದರು.

ಕ್ವಟ್ರೋಚಿ ವಿಷಯದಲ್ಲಿ ಕಾಂಗ್ರೆಸ್ ನಡವಳಿಕೆ ಈಗಲೂ ಸಂಶಯಾಸ್ಪದವಾಗಿದೆ. ಸೋನಿಯಾಗಾಂಧಿ ಪ್ರಧಾನಿ ಪಟ್ಟವನ್ನು ತ್ಯಾಗಮಾಡಲು ಅವರನ್ನು ಕಾಡುತ್ತಿದ್ದ `ಕ್ವಟ್ರೋಚಿ ಭೂತ`ವೂ ಕಾರಣವೆನ್ನಲಾಗುತ್ತಿದೆ. ಬೋಪೋರ್ಸ್ ಹಗರಣದಲ್ಲಿ ಆರೋಪಿಗಳಾಗಿದ್ದ ಹಿಂದುಜಾ ಸೋದರರ ಜತೆಯಲ್ಲಿ ಬಿಜೆಪಿ ನಾಯಕ ಅಟಲ ಬಿಹಾರಿ ವಾಜಪೇಯಿ ಹಾರ್ದಿಕ ಸಂಬಂಧ ಹೊಂದಿದ್ದನ್ನು ಬಿಜೆಪಿ ಕೂಡಾ ನಿರಾಕರಿಸುವ ಸ್ಥಿತಿಯಲ್ಲಿ ಇಲ್ಲ.

ಬೋಫೋರ್ಸ್ ಹಗರಣದ ಬಗ್ಗೆ ಗುಲ್ಲೆಬ್ಬಿಸಿದ್ದ ಬಿಜೆಪಿ ಅಧಿಕಾರಕ್ಕೆ ಬಂದಾಗಲೂ ರಕ್ಷಣಾ ಇಲಾಖೆಯನ್ನು ಹಗರಣಗಳು ಸುತ್ತಿಕೊಂಡಿದ್ದವು. ಆ ಖಾತೆಯ ಹೊಣೆ ಹೊತ್ತಿದ್ದ ಜಾರ್ಜ್ ಫರ್ನಾಂಡಿಸ್ ಎಂಬ ಇನ್ನೊಬ್ಬ ಪ್ರಾಮಾಣಿಕ ರಾಜಕಾರಣಿ ಕಳಂಕವನ್ನು ಹೊತ್ತುಕೊಂಡೇ ನಿರ್ಗಮಿಸಬೇಕಾಯಿತು.

ಕಾರ್ಗಿಲ್ ಯುದ್ದದ ಸಮಯದಲ್ಲಿ ರಕ್ಷಣಾ ಇಲಾಖೆ ಅತೀ ಅವಸರದಿಂದ ನಡೆಸಿದ್ದ  ಅಂದಾಜು ಎರಡು ಸಾವಿರ ಕೋಟಿ ರೂಪಾಯಿ ವೆಚ್ಚದ ಖರೀದಿಯಲ್ಲಿನ ಅವ್ಯವಹಾರವನ್ನು ಸಿಎಜಿ ಮತ್ತು ಪಿಎಸಿ ಬಿಚ್ಚಿಟ್ಟಿತ್ತು. ಮಾರುಕಟ್ಟೆಯಲ್ಲಿ 172 ಡಾಲರ್‌ಗೆ ಲಭ್ಯವಿದ್ದ ಶವಪೆಟ್ಟಿಗೆಗಳನ್ನು 2000 ಡಾಲರ್‌ಗೆ ಖರೀದಿಸಿದ್ದನ್ನು ಸಿಎಜಿ ತನ್ನ ವರದಿಯಲ್ಲಿ ಪ್ರಮುಖವಾಗಿ ಉಲ್ಲೇಖಿಸಿತ್ತು.

ಅದನ್ನು ಸಮರ್ಥಿಸಿಕೊಳ್ಳಲು ಫರ್ನಾಂಡಿಸ್ ಅವರಿಗೆ ಕೊನೆಗೂ ಸಾಧ್ಯವಾಗಲೇ ಇಲ್ಲ. ಇವುಗಳಿಗೆಲ್ಲ ತಾರ್ಕಿಕ ಅಂತ್ಯ ಎಂಬಂತೆ  `ಆಪರೇಷನ್ ವೆಸ್ಟ್ ಎಂಡ್` ಮೂಲಕ ತೆಹೆಲ್ಕಾ ಬಯಲುಗೊಳಿಸಿದ್ದ ರಕ್ಷಣಾ ಇಲಾಖೆಯ ಅಂತರಂಗದ ವ್ಯವಹಾರಗಳನ್ನು ನೋಡಿ ದೇಶದ ಜನ ಬೆಚ್ಚಿ ಬಿದ್ದಿದ್ದರು.

ಫರ್ನಾಂಡಿಸ್ ಅವರ ಪಕ್ಷದ ಮಾಜಿ ಖಜಾಂಚಿ ಆರ್.ಕೆ.ಜೈನ್ `ಯಾರ‌್ಯಾರಿಂದ ಕಮಿಷನ್ ಪಡೆದಿದ್ದೆ` ಎಂದು ಹೇಳಿಕೊಂಡದ್ದನ್ನು ರಹಸ್ಯ ಕ್ಯಾಮೆರಾದ ಮೂಲಕ ಸೆರೆಹಿಡಿದು ತೆಹೆಲ್ಕಾ ಬಿತ್ತರಿಸಿತ್ತು.

ಸಚಿವರ ಮನೆಯಲ್ಲಿಯೇ ಅವರ ಸ್ನೇಹಿತೆ ಜಯಾ ಜೇಟ್ಲಿ ಅವರೇ `ವ್ಯವಹಾರ ಕುದುರಿಸುತ್ತಿದ್ದುದನ್ನು` ಕೂಡಾ ದೇಶ ಕಣ್ಣಾರೆ ನೋಡಿದೆ.ಶಸ್ತಾಸ್ತ್ರ ಖರೀದಿಯಲ್ಲಿ ದಲ್ಲಾಳಿಗಳ ನೇಮಕ, ಅವರಿಗೆ ಕಮಿಷನ್ ಪಾವತಿ ಹೊಸ ಸಂಗತಿಗಳೇನಲ್ಲ. ಎಲ್ಲ ದೇಶಗಳಲ್ಲಿಯೂ ಇದು ಅಧಿಕೃತವಾಗಿಯೋ, ಅನಧಿಕೃತವಾಗಿಯೋ ನಡೆಯುತ್ತದೆ.

ಇದನ್ನು ಸಂಪೂರ್ಣವಾಗಿ ತೊಡೆದುಹಾಕುವುದು ಸಾಧ್ಯ ಇಲ್ಲ. ಆದರೆ  ಕಳಪೆ ಗುಣಮಟ್ಟದ ರಕ್ಷಣಾ ಸಾಮಗ್ರಿಗಳ ಮಾರಾಟಕ್ಕಾಗಿ ಇಲ್ಲವೇ, ರಕ್ಷಣಾ ಸಾಮಗ್ರಿಗಳ ಬೆಲೆಯನ್ನು ಹಲವಾರು ಪಟ್ಟು ಹೆಚ್ಚಿಸಲು  ಕಮಿಷನ್ ನೀಡಿದಾಗ ಮತ್ತು ರಾಜಕಾರಣಿಗಳು ಇಲ್ಲವೇ ಅಧಿಕಾರಿಗಳಿಗೆ ಕಮಿಷನ್‌ನಲ್ಲಿ ಪಾಲು ಸಂದಾಯವಾದಾಗ ಅದು ದೇಶದ್ರೋಹದ ಅಪರಾಧವಾಗುತ್ತದೆ.

ಬೋಪೋರ್ಸ್ ಹಗರಣ ಬಯಲಾದಾಗಲೂ ಸರ್ಕಾರ ಪ್ರಾರಂಭದಲ್ಲಿ ಆ ವ್ಯವಹಾರದಲ್ಲಿ ಯಾವ ದಲ್ಲಾಳಿಯೂ ಇಲ್ಲ ಎಂದು ಹೇಳಿದ್ದರೂ, ಕೊನೆಗೆ ಒಪ್ಪಿಕೊಂಡಿತ್ತು. ದಲ್ಲಾಳಿಗಳು ಈಗಲೂ ಇದ್ದಾರೆ, ಆದರೆ ಅವರು ಯಾರ ಕಣ್ಣಿಗೂ ಬೀಳುವುದಿಲ್ಲ. ಅವರ ಪರವಾಗಿ ಬೇರೆ ಯಾರೋ ವ್ಯವಹಾರ ಕುದುರಿಸುತ್ತಾರೆ.

ಈ ಮೋಸದಾಟವನ್ನು ತಡೆಯಲಿಕ್ಕಾಗಿ ಅಧಿಕೃತವಾಗಿ ನೋಂದಣಿ ಮಾಡಲಾದ ದಲ್ಲಾಳಿಗಳ ಜತೆ ಮಾತ್ರ ವ್ಯವಹಾರ ನಡೆಸಬೇಕು, ಈ ಮೂಲಕ ವ್ಯವಹಾರವನ್ನು ಪಾರದರ್ಶಕಗೊಳಿಸಬೇಕೆಂಬ ಸಲಹೆಯೂ ಕೇಳಿಬಂದಿತ್ತು. ಎಲ್ಲವೂ ಅಧಿಕೃತವಾಗಿ ನಡೆದರೆ ರಾಜಕೀಯಕ್ಕೆ ದುಡ್ಡೆಲ್ಲಿಂದ ಬರಬೇಕು?

ಬಹಳ ವಿಚಿತ್ರವೆಂದರೆ, ಈ ವಿವಾದ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಚರ್ಚೆಗೀಡಾಗುತ್ತಿದ್ದರೂ ಬಿಜೆಪಿಯೂ ಸೇರಿದಂತೆ ಪ್ರಮುಖ ವಿರೋಧಪಕ್ಷಗಳು ಅದನ್ನು ಬಹಳ ಗಂಭೀರವಾಗಿ ಸ್ವೀಕರಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿಲ್ಲ. ಈ ಅಪೂರ್ವವಾದ `ಸಂಯಮ`ವನ್ನು ಶ್ಲಾಘಿಸಲಾಗುತ್ತಿದೆ.

`ಇದೇ ಮೊದಲ ಬಾರಿಗೆ ವಿರೋಧಪಕ್ಷಗಳು ಜವಾಬ್ದಾರಿಯಿಂದ ವರ್ತಿಸಿವೆ` ಎಂಬ ಶಹಭಾಸ್‌ಗಿರಿಯನ್ನೂ ಕೊಡಲಾಗುತ್ತಿದೆ. ಸತ್ಯ ಸಂಗತಿಯೇನೆಂದರೆ ರಕ್ಷಣಾ ಇಲಾಖೆಯನ್ನು ಬೀದಿಯಲ್ಲಿ ತೊಳೆಯುವುದು ಯಾರಿಗೂ ಬೇಡ. ಅದರಿಂದ ಕಳೆದ ಇಪ್ಪತ್ತೈದು ವರ್ಷಗಳ ಕೊಳೆಯೆಲ್ಲಾ ಹೊರಗೆ ಬರುವ ಸಂಭವ ಇದೆ.

ಕಾಂಗ್ರೆಸ್, ಬಿಜೆಪಿ, ತೃತೀಯರಂಗ ಹೀಗೆ ಎಲ್ಲ ಸರ್ಕಾರಗಳ ಕಾಲದ ಅಸ್ಥಿಪಂಜರಗಳು ರಕ್ಷಣಾಇಲಾಖೆಯ ಕಪಾಟಿನಲ್ಲಿವೆ. ಸ್ಯಾಂಪಲ್‌ಗಾಗಿ ಒಂದು ಅಸ್ಥಿ ಪಂಜರವನ್ನು ಹೊರತೆಗೆಯುವುದಾದರೆ.....

ಪ್ರಧಾನಿ ಪಿ.ವಿ.ನರಸಿಂಹರಾವ್ ತನ್ನ ಅಧಿಕಾರದ ಕೊನೆಯ ದಿನಗಳಲ್ಲಿ ಸುಖೋಯ್-31 ಯುದ್ಧ ವಿಮಾನ ಖರೀದಿಗೆ ರಷ್ಯಾ ಜತೆ ಒಪ್ಪಂದ ಮಾಡಿಕೊಂಡಿದ್ದರು. ಆಗ ಹಣಕಾಸು ಸಚಿವರಾಗಿದ್ದವರು ಮನಮೋಹನ್‌ಸಿಂಗ್.

ಚುನಾವಣೆಯ ಕಾಲದಲ್ಲಿಯೇ ಈ ಒಪ್ಪಂದದಲ್ಲಿನ ಅಕ್ರಮಗಳನ್ನು ಬಯಲು ಮಾಡಿದ್ದು ದೆಹಲಿಯ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ. ಏಳು ವರ್ಷಗಳ ಹಿಂದೆ ಆ ಪತ್ರಿಕೆಯ ಸಂಪಾದಕ ಶೇಖರ್ ಗುಪ್ತಾ ಸುಖೋಯ್ ಯುದ್ಧ ವಿಮಾನ ಹೇಗೆ ಪಕ್ಷಾತೀತವಾಗಿ ರಾಜಕಾರಣಿಗಳನ್ನು ಒಂದು ಮಾಡಿತ್ತು ಎಂಬುದನ್ನು ತಮ್ಮ ಅಂಕಣದಲ್ಲಿ  ಬರೆದಿದ್ದರು.

ಈ ಹಗರಣ ಬಯಲಾದ ಕೂಡಲೇ ಗುಪ್ತಾ ಅವರನ್ನು ಕರೆಸಿ ಬಿಜೆಪಿ ನಾಯಕರಾದ ಅಟಲಬಿಹಾರಿ ವಾಜಪೇಯಿ ಮತ್ತು ಜಸ್ವಂತ್ ಸಿಂಗ್ ಚರ್ಚಿಸಿದ್ದರಂತೆ. ಚುನಾವಣೆಯ ಕಾಲದಲ್ಲಿ ಬಿಜೆಪಿ ಈ ಹಗರಣವನ್ನು  ಉತ್ಸಾಹದಿಂದ ಬಳಸಿಕೊಂಡಿತ್ತು.

ಸುಖೋಯ್ ಖರೀದಿ ಒಪ್ಪಂದಕ್ಕೆ ಅಂತಿಮ ರೂಪ ನೀಡಿದ್ದು ನಂತರ ಅಧಿಕಾರಕ್ಕೆ ಬಂದ ಎಚ್.ಡಿ.ದೇವೇಗೌಡರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಮುಲಾಯಂ ಸಿಂಗ್ ಯಾದವ್. ಆ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದ ಶೇಖರ್ ಗುಪ್ತಾ ಹಿಂದಿನ ಹಗರಣವನ್ನು ವಿವರಿಸಿ, ಬಿಜೆಪಿ ನಾಯಕರದ್ದೂ ಅದಕ್ಕೆ ವಿರೋಧ ಇತ್ತು ಎಂದು ತಿಳಿಸಿದಾಗ ತಕ್ಷಣ ಪ್ರತಿಕ್ರಿಯಿಸಿದ್ದ ಮುಲಾಯಂಸಿಂಗ್ `ವಾಜಪೇಯಿ ಮತ್ತು ಜಸ್ವಂತ್‌ಸಿಂಗ್ ಇಬ್ಬರನ್ನೂ ಕರೆಸಿ ಸಮಾಲೋಚನೆ ನಡೆಸಿದ್ದೇನೆ.

ಅವರಿಬ್ಬರೂ ಕೆಲವು ಸಲಹೆಗಳನ್ನು ನೀಡಿದ್ದಾರೆ. ಆ ಒಪ್ಪಂದದಲ್ಲಿ ಏನೂ ಅಕ್ರಮ ಇಲ್ಲ. ನೀವೆಲ್ಲ ಪತ್ರಿಕೆಯವರು ಸುಮ್ಮನೆ ಬರೆಯುತ್ತೀರಿ` ಎಂದು ಛೇಡಿಸಿದ್ದರಂತೆ. ಸಿದ್ಧಾಂತದ ಹೆಸರಲ್ಲಿ ಪರಸ್ಪರ ಜುಟ್ಟು ಹಿಡಿದು ಕಾದಾಡುವ ಮತ್ತು ಜನಪರವಾದ ಮಸೂದೆಗಳನ್ನೂ ಒಮ್ಮತದಿಂದ ಅಂಗೀಕರಿಸಲು ಒಪ್ಪದ ವಿರೋಧಪಕ್ಷಗಳ ನಾಯಕರನ್ನು (ನರಸಿಂಹರಾವ್, ವಾಜಪೇಯಿ ಮತ್ತು ಮುಲಾಯಂ ಸಿಂಗ್) ಸುಖೋಯ್ ಯುದ್ಧ ವಿಮಾನ ಒಟ್ಟು ಮಾಡಿತು ಎಂದು ಶೇಖರ್ ಗುಪ್ತಾ ವ್ಯಂಗ್ಯದ ದನಿಯಲ್ಲಿ ಅಂಕಣ ಕೊನೆಗೊಳಿಸುತ್ತಾರೆ.

  ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ತಂದೆ ಪ್ರಧಾನಿಯಗಿದ್ದಾಗ ಶಸ್ತ್ರಾಸ್ತ್ರ ಖರೀದಿಗೆ ಸಂಬಂಧಿಸಿದಂತೆ ದಲ್ಲಾಳಿಯೊಬ್ಬ ಸಂಪರ್ಕಿಸಿ ಲಂಚದ ಆಮಿಷ ಒಡ್ಡಿದ್ದರು ಎಂದು ಹೇಳಿದ್ದರು.

ಅದು ಸುಖೋಯ್ ಖರೀದಿಗೆ ಸಂಬಂಧಿಸಿದ್ದಾಗಿರಬಹುದೇ? ದೇವೇಗೌಡರು ಪ್ರಧಾನಿಯಾಗಿದ್ದಾಗ ಕುಟುಂಬ ಸಮೇತ ರಷ್ಯಾ ಪ್ರವಾಸ ಮಾಡಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿಯವರೂ ಜತೆಯಲ್ಲಿದ್ದದ್ದು ನಿಜ. ಅಲ್ಲಿ ಏನಾಯಿತು ಎನ್ನುವುದನ್ನು ಅವರು ಮಾತ್ರ ಹೇಳಲು ಸಾಧ್ಯ.

ಜಾತಿ ನಾಯಕನಾಗುವುದು ಜನಪ್ರಿಯತೆಯಲ್ಲ March 26, 2012

ತನ್ನನ್ನು ಹೊಗಳಲು ಆಸ್ಥಾನ ತುಂಬಾ ವಿದೂಷಕರನ್ನು ಇಟ್ಟುಕೊಳ್ಳುತ್ತಿದ್ದ ರಾಜ ಮಹಾರಾಜರು ತಮ್ಮ ಬಗ್ಗೆ ಪ್ರಜೆಗಳು ಏನನ್ನುತ್ತಾರೆ ಎಂದು ತಿಳಿದುಕೊಳ್ಳಲು ಮಾತ್ರ ಮಾರುವೇಷದಲ್ಲಿ ಊರು ಸುತ್ತುತ್ತಿದ್ದರಂತೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸುತ್ತ ವಿದೂಷಕರಷ್ಟೇ ಇದ್ದಾರೆ, ಅದರ ಜತೆಗೆ ಮಾರುವೇಷದಲ್ಲಿ ಅವರೊಮ್ಮೆ ರಾಜ್ಯದಲ್ಲಿ ಒಂದು ಸುತ್ತು ಹೊಡೆದರೆ ಮರುದಿನದಿಂದ ಭಿನ್ನಮತೀಯ ಚಟುವಟಿಕೆಗಳನ್ನೆಲ್ಲ ಕೈಬಿಟ್ಟು ತೆಪ್ಪಗೆ ಮನೆಮೂಲೆ ಸೇರಿ ತನ್ನ ಸರದಿಗಾಗಿ ಕಾಯುತ್ತಾ ಕೂರಬಹುದು. ಆಡಳಿತಾರೂಢ ಬಿಜೆಪಿಯ ಭ್ರಷ್ಟಚಾರ, ವ್ಯಭಿಚಾರ ಮತ್ತು ಒಳಜಗಳದ ಜತೆಗೆ ಕಳೆದ ಆರು ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರು ನಡೆಸುತ್ತಿರುವ ಸರ್ಕಸ್ ಜನರಲ್ಲಿ ರೇಜಿಗೆ ಹುಟ್ಟಿಸಿದೆ. ಇದನ್ನು ತಿಳಿದುಕೊಳ್ಳಬೇಕಾದರೆ ಬಸ್ ನಿಲ್ದಾಣಗಳಲ್ಲಿಯೋ ಇಲ್ಲವೇ ಊರ ಸಂತೆಗಳಲ್ಲಿಯೋ ಜನರು ಆಡುತ್ತಿರುವ ಮಾತುಗಳಿಗೆ ಕಿವಿಕೊಟ್ಟರೆ ಸಾಕು.  ಈ ಪರಿಸ್ಥಿತಿ ಯಲ್ಲಿಯೂ `ತನಗೊಮ್ಮೆ ನಾಯಕತ್ವ ಕೊಟ್ಟು ನೋಡಿ, ಮುಂದಿನ ಚುನಾವಣೆಯಲ್ಲಿ 150 ಶಾಸಕರನ್ನು ಗೆಲ್ಲಿಸಿಕೊಂಡು ಬರುತ್ತೇನೆ` ಎಂದು ಯಡಿಯೂರಪ್ಪನವರು ಹೇಳುತ್ತಾರೆಂದರೆ.....

 ಗರಿಷ್ಠ ಐದು ವರ್ಷಗಳ ಕಾಲ ಮಾತ್ರ ಆಳಲು ರಾಜ್ಯದ ಮತದಾರರು ತಮ್ಮ ಪಕ್ಷವನ್ನು ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಿದ್ದಾರೆ ಎಂದು ಯಡಿಯೂರಪ್ಪನವರು ಎಂದೂ ತಿಳಿದುಕೊಂಡವರಲ್ಲ. ಪ್ರಾರಂಭದ ದಿನದಿಂದಲೇ ಅವರು ಮಾತು ಶುರು ಮಾಡಿದರೆ `ಇನ್ನು ಇಪ್ಪತ್ತು ವರ್ಷಗಳ ಕಾಲ ನಾವೇ...` ಎಂದು ಹೇಳುತ್ತಿದ್ದರು. ಈ ರೀತಿ ಹೇಳುವುದು  ನಾಡಿನ ಪ್ರಜ್ಞಾವಂತ ಮತದಾರರಿಗೆ ಮಾಡುವ ಅವಮಾನ ಎನ್ನುವ ಸಣ್ಣ ಅಳುಕು ಕೂಡಾ ಅವರನ್ನು ಕಾಡುವುದಿಲ್ಲ. ಉಳಿಸಿಕೊಂಡರೆ ಮಾತ್ರ ಈ ಐದು ವರ್ಷಗಳ ಅವಧಿ, ಇಲ್ಲದಿದ್ದರೆ ಅದಕ್ಕಿಂತ ಮೊದಲೇ ಗಂಟುಮೂಟೆ ಕಟ್ಟಿಕೊಂಡು ಹೊರಟು ಹೋಗಬೇಕಾಗುತ್ತದೆ ಎನ್ನುವ ಪ್ರಜಾಪ್ರಭುತ್ವ ವ್ಯವಸ್ಥೆಯ ಕಠೋರ ಸತ್ಯವನ್ನೂ ಅವರು ಅರ್ಥಮಾಡಿಕೊಂಡಿಲ್ಲ.

ಗೆಲುವಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ವಿಫಲನಾದವನು ಆ ಗೆಲುವನ್ನು ಬಹಳ ಕಾಲ ಉಳಿಸಿಕೊಳ್ಳಲು ಆಗುವುದಿಲ್ಲ. ಯಡಿಯೂರಪ್ಪನವರ ರಾಜಕೀಯ ಹಿನ್ನಡೆಗೆ ಇದು ಕಾರಣ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದೇ ತನ್ನಿಂದ ಎಂದು ಅವರು ಬಲವಾಗಿ ನಂಬಿದ್ದಾರೆ. ಅವರು ಒಂದು ಪ್ರಾದೇಶಿಕ ಪಕ್ಷದ ನಾಯಕರಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬಂದಿದ್ದರೆ ಅವರ ನಂಬಿಕೆಗೆ ಆಧಾರ ಇರುತ್ತಿತ್ತು, ಅದನ್ನು ನಂಬಬಹುದಿತ್ತು.

ಆದರೆ ಯಡಿಯೂರಪ್ಪನವರು ಒಂದು ರಾಷ್ಟ್ರೀಯ ಪಕ್ಷದ ನಾಯಕರು. ರಾಜ್ಯದ ಮತದಾರರು ಆರಿಸಿದ್ದು ಭಾರತೀಯ ಜನತಾ ಪಕ್ಷವನ್ನು, ಕೇವಲ ಯಡಿಯೂರಪ್ಪನವರನ್ನಲ್ಲ. ಅದೇನು ದೊಡ್ಡ ಗೆಲುವು ಕೂಡಾ ಅಲ್ಲ. ಸಂಖ್ಯೆಯಲ್ಲಿ ಶಾಸಕರು ಹೆಚ್ಚಿದ್ದರೂ ಮತ ಪ್ರಮಾಣದಲ್ಲಿ  ಶೇಕಡಾ 0.73ರಷ್ಟು ಮುಂದೆ ಇದ್ದದ್ದು ಕಾಂಗ್ರೆಸ್.

ರಾಜ್ಯದಲ್ಲಿ  ಅಧಿಕಾರಕ್ಕೆ ಬರುವಷ್ಟು ಬಿಜೆಪಿ ಬೆಳೆಯಲು ಮುಖ್ಯಪಾತ್ರ ವಹಿಸಿದ್ದವರು ಬಿ.ಎಸ್.ಯಡಿಯೂರಪ್ಪ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅವರೊಬ್ಬರೇ ಗೆಲುವಿಗೆ ಕಾರಣರಲ್ಲ. ಯಡಿಯೂರಪ್ಪನವರ ಜನಪ್ರಿಯತೆಯ ಜತೆಯಲ್ಲಿ ಸೀಮಿತ ಪ್ರಮಾಣದಲ್ಲಿಯಾದರೂ ಸಂಘ ಪರಿವಾರ ಹೊಂದಿದ್ದ ನೆಲೆ, ಎಚ್.ಡಿ.ಕುಮಾರಸ್ವಾಮಿಯವರ `ವಚನಭಂಗ` ಹುಟ್ಟಿಸಿದ ಜನಾಕ್ರೋಶ, ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯವಾಗಿ ಅನ್ಯಾಯಕ್ಕೀಡಾಗಿದ್ದ ಮಾದಿಗ ಸಮುದಾಯವನ್ನು ಸೆಳೆದುಕೊಂಡು ನಡೆಸಿದ್ದ ಸೋಷಿಯಲ್ ಎಂಜಿನಿಯರಿಂಗ್, ಅಸ್ಪೃಶ್ಯರಲ್ಲದ ಬೋವಿ ಮತ್ತಿತರ ಜಾತಿಗಳ ಅಭ್ಯರ್ಥಿಗಳನ್ನು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಕ್ಷೇತ್ರದಲ್ಲಿ ಕಣಕ್ಕಿಳಿಸಿ ಮೇಲ್ಜಾತಿ ಮತಗಳನ್ನು ಪಡೆದ ರಾಜಕೀಯ ಜಾಣತನ, ನೀರಿನಂತೆ ಹರಿದ ಬಳ್ಳಾರಿ ಗಣಿ ಲೂಟಿಕೋರರ ದುಡ್ಡು....ಇವುಗಳೆಲ್ಲವೂ 2008ರಲ್ಲಿ ಬಿಜೆಪಿ ಗೆಲುವಿಗೆ ಕಾರಣ.

ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುತ್ತೇನೆ ಎಂದು ಯಡಿಯೂರಪ್ಪನವರು ಈಗ ಹೇಳುತ್ತಿರುವುದು ತನ್ನ ಯಾವ ಸಾಧನೆಯನ್ನು ನಂಬಿಕೊಂಡು? ಮೂರುವರೆ ವರ್ಷಗಳ ಕಾಲದ ಭ್ರಷ್ಟಾಚಾರ ಮುಕ್ತ ನಡವಳಿಕೆಯನ್ನೇ? ರಾಜ್ಯಕ್ಕೆ ಕೊಟ್ಟಿರುವ ಬಿಗಿಯಾದ  ಆಡಳಿತವನ್ನೇ?  ಅನುಷ್ಠಾನಕ್ಕೆ ತಂದಿರುವ ಜನಪರ ಅಭಿವೃದ್ಧಿ ಯೋಜನೆಗಳನ್ನೇ? ಶಾಸಕರು ಸೇರಿದಂತೆ ಸಹೋದ್ಯೋಗಿಗಳ ಜತೆ ತಾನು ಉಳಿಸಿಕೊಂಡಿರುವ ಸೌಹಾರ್ದಯುತ ಸಂಬಂಧವನ್ನೇ? ಯಾವುದನ್ನು?  ಲೋಕಾಯುಕ್ತ ಸಲ್ಲಿಸಿದ್ದ ಪ್ರಥಮಮಾಹಿತಿ ವರದಿಯನ್ನು ಹೈಕೋರ್ಟ್ ರದ್ದು ಮಾಡಿದ ಮಾತ್ರಕ್ಕೆ ತಾನು ದೋಷಮುಕ್ತ ಎಂದು ಅವರು ಹೇಗೆ ತಿಳಿದುಕೊಂಡರೋ ಗೊತ್ತಿಲ್ಲ.  ಅವರ ಬೆಂಬಲಿಗರು ಸದಾ ಹೇಳುತ್ತಿರುವ `ಸಹಜ ನ್ಯಾಯ`ದ ಪ್ರಕಾರ ಆ ಪ್ರಕರಣ ಸುಪ್ರೀಂಕೋರ್ಟ್‌ನ ವಿಚಾರಣೆಗೊಳಪಡಬೇಕಲ್ಲವೇ? ಒಂದೊಮ್ಮೆ ಹೈಕೋರ್ಟ್ ತೀರ್ಪು ತನ್ನ ವಿರುದ್ಧವಾಗಿ ಬಂದಿದ್ದರೆ ಅದನ್ನು ಯಡಿಯೂರಪ್ಪನವರು ಒಪ್ಪಿಕೊಳ್ಳುತ್ತಿದ್ದರೇ? ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಿರಲಿಲ್ಲವೇ?  ತನ್ನ ನಿರಪರಾಧಿತನದ ಬಗ್ಗೆ ಅವರು ಅಷ್ಟೊಂದು ವಿಶ್ವಾಸ ಹೊಂದಿದ್ದರೆ ಆದಷ್ಟು ಬೇಗ ಲೋಕಾಯುಕ್ತ ಮೇಲ್ಮನವಿ ಸಲ್ಲಿಸುವಂತೆ ಮಾಡಿ ಸುಪ್ರೀಂಕೋರ್ಟ್‌ನಿಂದಲೇ ಪ್ರಾಮಾಣಿಕತೆಗೆ  ಯಾಕೆ ಸರ್ಟಿಫಿಕೇಟ್ ತೆಗೆದುಕೊಳ್ಳಬಾರದು? ಯಡಿಯೂರಪ್ಪನವರನ್ನು ಭ್ರಷ್ಟಾಚಾರದ ಆರೋಪಗಳು ಯಾವ ರೀತಿಯಲ್ಲಿ ಸುತ್ತಿಕೊಂಡಿವೆ ಎಂದರೆ ಬಹಳ ಬೇಗ ಅವೆಲ್ಲವುಗಳಿಂದ ಬಿಡಿಸಿಕೊಳ್ಳುವುದು ಕಷ್ಟ. ಇವುಗಳಿಂದ ಬಿಡಿಸಿಕೊಳ್ಳದೆ ಚುನಾವಣೆಯಲ್ಲಿ ಮತದಾರರನ್ನು ಹೇಗೆ ಎದುರಿಸಲು ಸಾಧ್ಯ?

ಭ್ರಷ್ಟಾಚಾರದ ಆರೋಪ ಹೊತ್ತವರೂ ಉತ್ತಮ ಆಡಳಿತಗಾರರಾಗಿರುವ ಉದಾಹರಣೆಗಳು ಸಾಕಷ್ಟಿವೆ. ಶರದ್‌ಪವಾರ್, ಮಾಯಾವತಿ, ಜಯಲಲಿತಾ ಮೊದಲಾದವರೆಲ್ಲ ಈ ಗುಂಪಿಗೆ ಸೇರಿದವರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದಲ್ಲಿ ಎಷ್ಟು ದಿನ ಶಿಸ್ತಿನಿಂದ ಕೂತು ಆಡಳಿತ ನಡೆಸಿದ್ದಾರೆ? ಅಧಿಕಾರಿಗಳ ವರ್ಗಾವಣೆಗಳಷ್ಟೇ ಆಡಳಿತ ಅಲ್ಲವಲ್ಲ? ಬಜೆಟ್‌ನಲ್ಲಿ ಒಂದಷ್ಟು ಜನಪ್ರಿಯ ಯೋಜನೆಗಳ ಘೋಷಣೆ ಮತ್ತು ಮಠ-ಮಂದಿರಗಳಿಗೆ ದುಡ್ಡು ಹಂಚಿಕೆಯಷ್ಟೇ ಅಭಿವೃದ್ಧಿ ಯೋಜನೆಗಳೆಂದು ಅವರು ತಿಳಿದುಕೊಂಡ ಹಾಗಿದೆ. ರಾಜ್ಯದ ಕೃಷಿ ಮತ್ತು ಕೈಗಾರಿಕೆಗಳ ಕ್ಷೇತ್ರದಲ್ಲಿ ರಾಜ್ಯ ಹಿನ್ನಡೆ ಅನುಭವಿಸಿರುವುದಕ್ಕೆ ಸರ್ಕಾರವೇ ಮಂಡಿಸಿರುವ ಆರ್ಥಿಕ ಸಮೀಕ್ಷೆಗಿಂತ ಬೇರೆ ದಾಖಲೆಗಳೇನು ಬೇಕು? ಮಾತೆತ್ತಿದರೆ ಸೈಕಲ್, ಸೀರೆ, ಪಂಚೆ ಎನ್ನುವುದನ್ನು ಬಿಟ್ಟರೆ ಸರ್ಕಾರದ ಸಾಧನೆಯೆಂದು ಹೇಳಿಕೊಳ್ಳಲು ಬೇರೇನಾದರೂ ಇದೆಯೇ? ಮೂರುವರ್ಷಗಳಾಗುತ್ತಾ ಬಂದರೂ ಉತ್ತರ ಕರ್ನಾಟಕದ ನೆರೆಪೀಡಿತ ಕುಟುಂಬಗಳಿಗೆಲ್ಲ ಮನೆ ಕಟ್ಟಿಕೊಡಲು ಸಾಧ್ಯವಾಗದಿರುವುದನ್ನು ಸಾಧನೆ ಎನ್ನೋಣವೇ?

ಕೊನೆಯದಾಗಿ ಯಡಿಯೂರಪ್ಪನವರ ನಡವಳಿಕೆ. ಬಿಜೆಪಿ ಶಾಸಕರು ಬಂಡೆದ್ದು ಮೊದಲು ಗಾಲಿ ಜನಾರ್ದನ ರೆಡ್ಡಿ ಜತೆಯಲ್ಲಿ, ನಂತರ ಎಚ್.ಡಿ.ಕುಮಾರಸ್ವಾಮಿಯವರ ಜತೆಯಲ್ಲಿ ಸೇರಿಕೊಂಡು ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿದ್ದು ಮುಖ್ಯವಾಗಿ ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ. ತಮ್ಮ ಮಾತುಗಳನ್ನು ಕೇಳುವ ತಾಳ್ಮೆಯಾಗಲಿ, ಅದನ್ನು ಅರ್ಥಮಾಡಿಕೊಳ್ಳುವ ಔದಾರ್ಯವಾಗಲಿ ಅವರಲ್ಲಿ ಇಲ್ಲ ಎನ್ನುವುದೇ ಆ ಭಿನ್ನಮತೀಯರ ಪ್ರಮುಖ ದೂರು ಆಗಿತ್ತು. ಮೊನ್ನೆ ರೆಸಾರ್ಟ್‌ಗೆ ಬೆಂಬಲಿಗ ಶಾಸಕರನ್ನು ಕರೆದುಕೊಂಡು ಹೋದ ಅವರ ನಡವಳಿಕೆಯನ್ನು ಗಮನಿಸಿದರೆ ಯಡಿಯೂರಪ್ಪನವರು ಈಗಲೂ ಬದಲಾಗಿದ್ದಾರೆಂದು ಅನಿಸುವುದಿಲ್ಲ. ಭೇಟಿಗೆಂದು ತನ್ನ ಮನೆಗೆ ಬಂದವರನ್ನು ಹೊರಗೆ ಹೋಗಲು ಬಿಡದೆ ಕುರಿಗಳನ್ನು ಅಟ್ಟಿಸಿಕೊಂಡು ಹೋಗುವಂತೆ ಬಸ್‌ನಲ್ಲಿ ತುಂಬಿಸಿ ಕೊಂಡೊಯ್ದಿದ್ದಾರೆ. ಅವರಲ್ಲಿ ಬಹಳಷ್ಟು ಶಾಸಕರಿಗೆ ರೆಸಾರ್ಟ್ ವಾಸ ಅನಿರೀಕ್ಷಿತವಾಗಿತ್ತು. ಅವರೆಲ್ಲ ಬೆಂಬಲಿಗರಾಗಿದ್ದರೂ ತಮ್ಮ ಮೇಲೆ ವಿಶ್ವಾಸ ಇಲ್ಲದ ನಾಯಕನ ಈ ರೀತಿಯ ಬಲವಂತದ ನಡವಳಿಕೆಯನ್ನು ಖಂಡಿತ ಇಷ್ಟಪಡಲಾರರು.

ಹಾಗಿದ್ದರೆ ಯಾವ ಬಲವನ್ನು ನಂಬಿ ಅವರು ಬಿಜೆಪಿಯನ್ನು ಅಧಿಕಾರಕ್ಕೆ ಮರಳಿ ತರುತ್ತೇನೆ ಎಂದು ಹೇಳುತ್ತಿರುವುದು? ತನಗೆ ಜನರ ಬೆಂಬಲ ಇದೆ ಎಂದು ಅವರು ಹೇಳುತ್ತಿದ್ದಾರೆ. ಯಾವ ಜನ? ಈಗಿನ ವಿಧಾನಸಭೆಯಲ್ಲಿ ಅತೀ ಹೆಚ್ಚು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಶಾಸಕರನ್ನು ಹೊಂದಿರುವುದು ಬಿಜೆಪಿ. ಆದರೆ ಕಳೆದವಾರ ರೆಸಾರ್ಟಿನಲ್ಲಿ ಬಲ ಪ್ರದರ್ಶಿಸಲು ಕೂಡಿಹಾಕಿಕೊಂಡಿದ್ದ ಶಾಸಕರಲ್ಲಿ ಪರಿಶಿಷ್ಟ ಶಾಸಕರ ತಲೆಗಳು ಹೆಚ್ಚು ಕಾಣಲೇ ಇಲ್ಲ, ಪ್ರಮುಖ ದಲಿತ ನಾಯಕರು ಯಾರೂ ಅಲ್ಲಿ ಇರಲಿಲ್ಲ.

ಶೋಭಾ ಕರಂದ್ಲಾಜೆಯವರನ್ನೂ ಸೇರಿಸಿಕೊಂಡರೂ ಯಡಿಯೂರಪ್ಪನವರ ಜತೆಯಲ್ಲಿ ಕಾಣಿಸಿಕೊಂಡದ್ದು  ಇಬ್ಬರೋ ಮೂವರೋ ಒಕ್ಕಲಿಗ ಶಾಸಕರು ಅಷ್ಟೇ. ಹಿಂದುಳಿದ ಜಾತಿಗಳ ಶಾಸಕರಿದ್ದದ್ದು ಕೂಡಾ ಬೆರಳೆಣಿಕೆಯಲ್ಲಿ. ಅವರ ಸುತ್ತ ಸೇರಿರುವ ಬಹುತೇಕ ಶಾಸಕರು ಲಿಂಗಾಯತ ಜಾತಿಗೆ ಸೇರಿದವರು. ಶಕ್ತಿಪ್ರದರ್ಶನಕ್ಕೆ ಅವರು ಬಳಸಿಕೊಳ್ಳುತ್ತಿರುವುದು ಕೂಡಾ ಸ್ವಜಾತಿಯ ಸ್ವಾಮೀಜಿಗಳನ್ನು.

ಭಾರತದ ರಾಜಕೀಯದಲ್ಲಿ ಜಾತಿಯದ್ದು ಬಹಳ ನಿರ್ಣಾಯಕ ಪಾತ್ರ ಎನ್ನುವುದು ನಿಜ. ಆದರೆ ಇದನ್ನು ಅರ್ಥಮಾಡಿಕೊಳ್ಳದೆ ಇಲ್ಲಿನ ಜಾತಿವ್ಯವಸ್ಥೆಯ ಹುತ್ತದೊಳಗೆ ಪೆದ್ದರಂತೆ ಕೈಹಾಕುವವರನ್ನು ಒಳಗಿದ್ದ ಹಾವು ಎದ್ದುಬಂದು ಕಡಿದುಬಿಡುತ್ತದೆ. ಜಾತಿಯ ಆಧಾರದಲ್ಲಿಯೇ ಮತಚಲಾಯಿಸುವವರು ಒಂದಷ್ಟು ಸಂಖ್ಯೆಯಲ್ಲಿದ್ದರೂ ಹೆಚ್ಚಿನವರು ಜಾತಿ ಅಭ್ಯರ್ಥಿಗಳನ್ನು ಬೆಂಬಲಿಸಲು ಬೇರೆ ಕಾರಣಗಳೂ ಇರುತ್ತವೆ.  ಒಂದೊಮ್ಮೆ ಆ ರೀತಿ ಯಾವುದಾದರೂ ಒಂದು ಜಾತಿಯವರು ಸ್ವಜಾತಿ ಅಭ್ಯರ್ಥಿಗೆ ನೂರಕ್ಕೆ ನೂರರಷ್ಟು ಮತಹಾಕಿ ಗೆಲ್ಲಿಸಬೇಕೆಂದು ನಿರ್ಧರಿಸಿದರೂ ಅದಕ್ಕೆ ಬೇಕಾದ ಸಂಖ್ಯಾಬಲ ದೇಶದಲ್ಲಿರುವ ಯಾವ ಜಾತಿಗೂ ಇಲ್ಲ, ಬೇರೆ ಜಾತಿಯವರ ಬೆಂಬಲ ಬೇಕೇ ಬೇಕು. ಈ ದೇಶದಲ್ಲಿ ಅತ್ಯಂತ ನಿಷ್ಠಾವಂತ ಮತದಾರರನ್ನು ಹೊಂದಿರುವ ರಾಜಕೀಯ ನಾಯಕಿ ಮಾಯಾವತಿ. ಆ ರಾಜ್ಯದಲ್ಲಿ ಶೇಕಡಾ 22ರಷ್ಟಿರುವ ದಲಿತರು ಬಿಎಸ್‌ಪಿ ಬೆಂಬಲಿಗರು, ಅವರೊಳಗೆ ಶೇಕಡಾ ಹನ್ನೆರಡರಷ್ಟಿರುವ ಜಾಟವರು ಕಣ್ಣುಮುಚ್ಚಿಕೊಂಡು ಬೆಹೆನ್‌ಜಿಗೆ ಮತಹಾಕುವವರು. ಹೀಗಿದ್ದರೂ ಅವರು ಯಾಕೆ ಸೋತುಹೋದರು? ಕರ್ನಾಟಕದಲ್ಲಿ ಮುಸ್ಲಿಮರ ಜನಸಂಖ್ಯೆ ಲಿಂಗಾಯತರಿಗಿಂತ ಶೇಕಡಾ ಎರಡರಷ್ಟು ಮಾತ್ರ ಕಡಿಮೆ ಇದೆ.

ಮುಸ್ಲಿಮರು ಗುಂಪಾಗಿ ಒಂದೇ ಅಭ್ಯರ್ಥಿಗೆ ಮತಚಲಾಯಿಸುತ್ತಾರೆ ಎನ್ನುವ ಅಭಿಪ್ರಾಯವೂ ಇದೆ. ಹೀಗಿದ್ದರೂ ಗ್ರಾಮಪಂಚಾಯತ್‌ನಿಂದ ಸಂಸತ್‌ವರೆಗೆ ಎಷ್ಟು ಮುಸ್ಲಿಮ್ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವರಿಗೆ ಸಾಧ್ಯವಾಗಿದೆ?

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಪ್ರಮಾಣ ಶೇಕಡಾ ಹದಿನೈದುವರೆ. ಒಂದಷ್ಟು ಕ್ಷೇತ್ರಗಳಲ್ಲಿ ಈ ಪ್ರಮಾಣ ಶೇಕಡಾ 20-25ರಷ್ಟಿರಬಹುದು. ಆದರೆ ಇಷ್ಟರಿಂದಲೇ ಒಬ್ಬ ಲಿಂಗಾಯತ ಅಭ್ಯರ್ಥಿ ಗೆಲ್ಲಲು ಸಾಧ್ಯವೇ? ಕಳೆದ ಚುನಾವಣೆಯ ಕಾಲದಲ್ಲಿ ರಾಜ್ಯದ ಲಿಂಗಾಯತರು ಬಹುಸಂಖ್ಯೆಯಲ್ಲಿ ಯಡಿಯೂರಪ್ಪನವರಿಂದಾಗಿ ಬಿಜೆಪಿಗೆ ಮತ ಹಾಕಿರುವುದು ನಿಜ ಇರಬಹುದು. ವೀರೇಂದ್ರ ಪಾಟೀಲರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿದ ನಂತರ ಅಸಮಾಧಾನಕ್ಕೀಡಾಗಿದ್ದ ಲಿಂಗಾಯತರು ರಾಜಕೀಯ ಬಲಪ್ರದರ್ಶನದ ಅವಕಾಶಕ್ಕಾಗಿ ಕಾಯುತ್ತಿದ್ದರು. ಅದೇ ಸಮಯದಲ್ಲಿ ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಬಿಜೆಪಿ ರಾಜ್ಯದ ಪ್ರಮುಖ ಜಾತಿಗೆ ಸೇರಿರುವ ಒಬ್ಬ ಜನಪ್ರಿಯ ನಾಯಕನ ಹುಡುಕಾಟದಲ್ಲಿತ್ತು. ಈ ಎರಡೂ ಅವಕಾಶವನ್ನು ಯಡಿಯೂರಪ್ಪನವರು ಬಳಸಿಕೊಂಡರು, ಮುಖ್ಯಮಂತ್ರಿಯೂ ಆಗಿಬಿಟ್ಟರು.ಆದರೆ ತನ್ನ ಜಾತಿಯ ಜನ ಹೆಮ್ಮೆಪಟ್ಟುಕೊಳ್ಳುವಂತಹ ಜನಪ್ರಿಯ ನಾಯಕರಾಗಿ  ಬೆಳೆದರೇ? ಜನನಾಯಕನಾಗಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಯಡಿಯೂರಪ್ಪನವರು ಮೂರುವರೆ ವರ್ಷಗಳ ಕಾಲದ ಅಧಿಕಾರದ ನಂತರ ತನ್ನ ರಾಜಕೀಯ ಉಳಿವಿಗಾಗಿ ಒಂದು ಜಾತಿಯ ನಾಯಕನಾಗಿ ತನ್ನನ್ನು ಬಿಂಬಿಸಿಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಖಂಡಿತ ಅವರ ಜನಪ್ರಿಯತೆಯನ್ನು ತೋರಿಸುವುದಿಲ್ಲ.

ಇದು ಮೂರ್ಖರು ಮತ್ತು ತಿಕ್ಕಲರ ನಡುವಿನ ಪೈಪೋಟಿ March 19, 2012

ಕೇಂದ್ರ ಸರ್ಕಾರದಲ್ಲಿ ಕಾಣಿಸಿಕೊಂಡಿರುವ  ಬಿಕ್ಕಟ್ಟಿಗೆ ಎರಡು ಮುಖಗಳಿವೆ. ಮೊದಲನೆಯದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ರಾಜಕೀಯ ತಿಕ್ಕಲುತನ, ಎರಡನೆಯದು ಕಾಂಗ್ರೆಸ್ ಪಕ್ಷದ ಮೂರ್ಖತನ.

ಈಗಿನ ರಾಜಕೀಯ ಬಿಕ್ಕಟ್ಟಿಗೆ ಮೊದಲನೆಯದಕ್ಕಿಂತ ಎರಡನೆಯದ್ದೇ ಮುಖ್ಯ ಕಾರಣ. ಅಣ್ಣಾಹಜಾರೆ ಚಳುವಳಿಯಿಂದ ಹಿಡಿದು ರೈಲ್ವೆ ಬಜೆಟ್ ಪ್ರಹಸನದವರೆಗೆ ಕಾಂಗ್ರೆಸ್ ಕಾರ್ಯವೈಖರಿಯನ್ನು ನೋಡುತ್ತಾ ಬಂದರೆ ಆ ಪಕ್ಷದ ಮೂರ್ಖ ನಡವಳಿಕೆಗಳಿಗೆ ಇನ್ನಷ್ಟು ಸಮರ್ಥನೆಗಳು ಸಿಗುತ್ತವೆ.

ರಾಜಕೀಯದಲ್ಲಿ ಎದುರಾಳಿಗಳಿಗೆ ಬಡಿಯುವುದು, ಬಡಿಸಿಕೊಳ್ಳುವುದು ಇದ್ದೇ ಇರುತ್ತದೆ. ಆದರೆ ಮೂರ್ಖರು ಮಾತ್ರ ಎದುರಾಳಿಯ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತಾರೆ. ಮಮತಾ ಬ್ಯಾನರ್ಜಿ ಜತೆಗಿನ ಸಂಘರ್ಷದಲ್ಲಿ ಇದನ್ನೇ ಕಾಂಗ್ರೆಸ್ ಮಾಡಿಕೊಂಡಿರುವುದು.

ಭಾರತದ ರಾಜಕೀಯದ ನಾಲ್ವರು ಕುಮಾರಿಯರಾದ ಜೆ.ಜಯಲಲಿತಾ, ಮಾಯಾವತಿ, ಮಮತಾ ಬ್ಯಾನರ್ಜಿ ಮತ್ತು ಉಮಾಭಾರತಿ ಜತೆಗಿನ ರಾಜಕೀಯ ಸಂಬಂಧ ಎಷ್ಟು ಕಠಿಣ ಎಂಬುದಕ್ಕೆ ಬೇಕಾದಷ್ಟು ಉದಾಹರಣೆಗಳಿವೆ. ತನ್ನ ಒಂದು ಕಣ್ಣು ಹೋದರೂ ಸರಿ, ವಿರೋಧಿಯ ಎರಡು ಕಣ್ಣು ಕಿತ್ತುಹಾಕಬೇಕೆನ್ನುವಷ್ಟು ಹಟಮಾರಿಗಳು ಈ ನಾಯಕಿಯರು.

ಇವರ ಅತಿರೇಕದ ನಡವಳಿಕೆಗಳಿಂದ ಆಗಿರುವ ರಾಜಕೀಯ ಅವಾಂತರಗಳನ್ನು ಜನರೂ ಮರೆತಿರಲಾರರು. ಉತ್ತರಪ್ರದೇಶದಲ್ಲಿ ಬಿಜೆಪಿ ಸೋತರೆ ಗಂಗಾನದಿಯಲ್ಲಿ ಮುಳುಗಿ ಸಾಯುವುದಾಗಿ ಮೊನ್ನೆ ಮೊನ್ನೆ ಉಮಾಭಾರತಿ ಸಾರ್ವಜನಿಕ ಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದರು. ಆ ಪ್ರತಿಜ್ಞೆಯನ್ನು ನೆರವೇರಿಸಿದ ಸುದ್ದಿ ಇಲ್ಲಿಯವರೆಗೆ ಬಂದಿಲ್ಲ.

ಅಟಲಬಿಹಾರಿ ವಾಜಪೇಯಿಯವರು ಈ ನಾಲ್ವರು ಕುಮಾರಿಯರಿಂದ ಸಾಕಷ್ಟು ತಲೆನೋವು ಅನುಭವಿಸಿದ್ದಾರೆ. ಮಾತನಾಡುವ ಸ್ಥಿತಿಯಲ್ಲಿ ಇದ್ದಿದ್ದರೆ  ಅವರು ಮನಮೋಹನ್ ಸಿಂಗ್ ಅವರನ್ನು ಕರೆದು  ಅನುಭವವನ್ನು ಹಂಚಿಕೊಳ್ಳುತ್ತಿದ್ದರೇನೋ? ಆದ್ದರಿಂದ ಕಾಂಗ್ರೆಸ್ ಕೀಟಳೆಗೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ಅನಿರೀಕ್ಷಿತವೇನಲ್ಲ.

ಅವರು ಇರುವುದೇ ಹಾಗೆ, ಅವರ ಜತೆ ಮೈತ್ರಿ ಬೇಕಿದ್ದರೆ ಆ ಸ್ಥಿತಿಯಲ್ಲಿಯೇ ಒಪ್ಪಿಕೊಂಡು ಸಂಬಂಧವನ್ನು ಉಳಿಸಿಕೊಂಡು ಹೋಗಬೇಕು, ಇಲ್ಲವಾದರೆ ಅದನ್ನು ಕಡಿದುಕೊಳ್ಳಬೇಕು. ಇದಕ್ಕೆ ಬದಲಾಗಿ ಸುಮ್ಮನೆ ಚಿವುಟಲು ಹೋದರೆ ಮುಸುಡಿಗೆ ಬಡಿಸಿಕೊಳ್ಳಬೇಕಾಗುತ್ತದೆ.

ಪೆಟ್ರೋಲ್ ದರ ಏರಿಕೆಯಿಂದ ಎನ್‌ಎಟಿಸಿ ರಚನೆವರೆಗೆ ಯುಪಿಎ ಸರ್ಕಾರದ ಹಲವಾರು ಪ್ರಮುಖ ನೀತಿ-ನಿರ್ಧಾರಗಳನ್ನು ತಡೆಹಿಡಿಯುವ ಮೂಲಕ ಮಮತಾ ಬ್ಯಾನರ್ಜಿ ತನ್ನನ್ನು ನಿರ್ಲಕ್ಷಿಸಬೇಡಿ ಎಂಬ ಸಂದೇಶವನ್ನು ಕಳುಹಿಸುತ್ತಲೇ ಇದ್ದಾರೆ.

ವಿರೋಧಿಸುವುದು ಅವರ ಮೂಲ ಸ್ವಭಾವ, ಜತೆಗೆ ಪಶ್ಚಿಮ ಬಂಗಾಳದಲ್ಲಿ ತನ್ನ ಪಕ್ಷದ ನೆಲೆಯನ್ನು ಉಳಿಸಿಕೊಳ್ಳಲು ಈ ರೀತಿಯ ಕಾಂಗ್ರೆಸ್ ವಿರೋಧದ ಸಂದೇಶವನ್ನು ಕಳುಹಿಸುವುದು ಅವರಿಗೂ ಅನಿವಾರ್ಯವಾಗಿರಲೂಬಹುದು.

ಇದನ್ನು ಅರ್ಥಮಾಡಿಕೊಂಡು ಈ ಒಳಜಗಳ ಬೀದಿಗೆ ಬರದಂತೆ ನೋಡಿಕೊಳ್ಳಬೇಕಾಗಿದ್ದ ಜವಾಬ್ದಾರಿ ಕಾಂಗ್ರೆಸ್ ಪಕ್ಷದ್ದಾಗಿತ್ತು. ಆದರೆ ಕಾಂಗ್ರೆಸ್ ನಾಯಕರು ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿಯೇ ಸಮಾಜವಾದಿ ಪಕ್ಷದ ಜತೆಗಿನ ಸಂಭವನೀಯ ಮೈತ್ರಿಯ ಗಾಳಿಸುದ್ದಿಯನ್ನು ತೇಲಿಬಿಟ್ಟು ಮಮತಾ ಅವರನ್ನು ಇನ್ನಷ್ಟು ಕೆರಳಿಸಿದ್ದರು.

ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ರೈಲ್ವೆ ಬಜೆಟ್ ದಿಟ್ಟತನದ ಪ್ರಯತ್ನ ಎನ್ನುವುದರಲ್ಲಿ ಅನುಮಾನ ಇಲ್ಲವೇ ಇಲ್ಲ.  ರೈಲ್ವೆಸಚಿವ ದಿನೇಶ್ ತ್ರಿವೇದಿ ಅವರ ಪಕ್ಷದ ನಾಯಕಿಯಾಗಿರುವ ಮಮತಾ ಬ್ಯಾನರ್ಜಿಯವರೂ ಸೇರಿದಂತೆ ಕಳೆದ ಹತ್ತುವರ್ಷಗಳ ಅವಧಿಯ ಎಲ್ಲ ರೈಲ್ವೆ ಸಚಿವರೂ ಕೇವಲ ಜನಪ್ರಿಯತೆಗಾಗಿ ಪ್ರಯಾಣ ದರವನ್ನು ಹೆಚ್ಚಿಸದೆ ಇಲಾಖೆಯನ್ನು ದಿವಾಳಿ ಸ್ಥಿತಿಗೆ ತಂದು ನಿಲ್ಲಿಸಿದ್ದರು. ತ್ರಿವೇದಿಯವರು ಈ ಜನವಿರೋಧಿ ಪರಂಪರೆಯನ್ನು ಮುರಿದು ಬಜೆಟ್ ಮಂಡಿಸಿದ್ದಾರೆ.

ಸದಾ ಅಭದ್ರತೆಯಿಂದ ನರಳುತ್ತಿರುವ ಮಮತಾ ಬ್ಯಾನರ್ಜಿ  ಸಹೋದ್ಯೋಗಿಯ ಇಂತಹ ದಿಟ್ಟತನವನ್ನು ಸಹಿಸಿಕೊಳ್ಳುವ ಸ್ವಭಾವದವರಲ್ಲ. ಅವರದ್ದು ಆಂತರಿಕ ಪ್ರಜಾತಂತ್ರ ಇಲ್ಲದ ಏಕವ್ಯಕ್ತಿ ಕೇಂದ್ರಿತ ಪಕ್ಷ.ಈ ವಿಷಯದಲ್ಲಿ ಅವರು ಜಯಲಲಿತಾ ಮತ್ತು ಮಾಯಾವತಿ ಪರಂಪರೆಗೆ ಸೇರಿದವರು.

ರೈಲ್ವೆ ಖಾತೆಯೊಂದನ್ನು ಹೊರತುಪಡಿಸಿ ಬೇರೆ ಯಾವ ಖಾತೆಯಲ್ಲಿಯೂ ತಮ್ಮ ಪಕ್ಷದ ಸದಸ್ಯರನ್ನು ಸಂಪುಟ ಸಚಿವರಾಗಲು ಬಿಡದಷ್ಟು ಸಣ್ಣ ಮನಸ್ಸಿನ ನಾಯಕಿ ಮಮತಾ.

ಇವೆಲ್ಲವೂ ಕಾಂಗ್ರೆಸ್ ನಾಯಕರಿಗೆ ಗೊತ್ತಿದ್ದ ಕಾರಣ ಅವರು ಇನ್ನಷ್ಟು ಎಚ್ಚರಿಕೆಯಿಂದ ವರ್ತಿಸಬೇಕಿತ್ತು. ಪ್ರಯಾಣ ದರ ಹೆಚ್ಚಳದಂತಹ ಪ್ರಮುಖ ನಿರ್ಧಾರವನ್ನು ಬಜೆಟ್‌ನಲ್ಲಿ ಪ್ರಕಟಿಸಲು ಹೊರಟಾಗ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷದ ಜತೆ ಸಮಾಲೋಚನೆ ನಡೆಸುವುದು ಬೇಡವೇ? ಅದೂ ಅದೇ ಪಕ್ಷದವರು ರೈಲ್ವೆ ಸಚಿವರಾಗಿದ್ದಾಗ. ಅಂತಹದ್ದೊಂದು ಮಾತುಕತೆ ನಡೆಸಿದ್ದರೆ ಸರ್ಕಾರ ಈಗಿನ ಮುಜುಗರದ ಪರಿಸ್ಥಿತಿಯನ್ನು ಎದುರಿಸಬೇಕಾಗಿರಲಿಲ್ಲ.

ಆದರೆ ಅದು ಮಾಡಿದ್ದೇನು? ಸ್ವಂತ ಬಲದಿಂದ ಮುನ್ಸಿಪಾಲಿಟಿ ಚುನಾವಣೆಯಲ್ಲಿಯೂ ಗೆಲ್ಲಲಾಗದ ದಿನೇಶ್ ತ್ರಿವೇದಿ ಎಂಬ ದುರ್ಬಲ ನಾಯಕನನ್ನು ಮುಂದಿಟ್ಟುಕೊಂಡು ಮಮತಾ ಬ್ಯಾನರ್ಜಿ ವಿರುದ್ಧ ದಾಳಿ ಮಾಡಲು ಹೊರಟಿತು. ಸಂಸದೀಯ ನಡವಳಿಕೆಗಳ ಪ್ರಕಾರ ಕೇಂದ್ರ ಸಂಪುಟದ ಸಚಿವರು ತಮ್ಮ ಖಾತೆಯ ನಿರ್ವಹಣೆಯಲ್ಲಿ ಪಕ್ಷದ ನಾಯಕರ ಸಲಹೆಯನ್ನು ಪಡೆಯಬೇಕಾಗಿಲ್ಲ ಎನ್ನುವುದು ನಿಜ.

ಆದರೆ ಒಂದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿನ ಅಭ್ಯರ್ಥಿಯ ಆಯ್ಕೆಗಾಗಿಯೂ ಸೋನಿಯಾ ಗಾಂಧಿಯವರ ಮನೆ ಬಾಗಿಲು ತಟ್ಟಬೇಕಾಗಿರುವ ಸ್ಥಿತಿಯಲ್ಲಿರುವ ಕಾಂಗ್ರೆಸ್ ಪಕ್ಷ ಮಿತ್ರಪಕ್ಷದಿಂದ ಇಷ್ಟೊಂದು ವಿಶಾಲ ಮನಸ್ಸನ್ನು ಹೇಗೆ ನಿರೀಕ್ಷಿಸಲು ಸಾಧ್ಯ?

 ಈಗಿನ ಬಿಕ್ಕಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರ ತಿಕ್ಕಲುತನದ ಕೊಡುಗೆಯೂ ದೊಡ್ಡದು. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರುವ ಮೊದಲು ಈ ತಿಕ್ಕಲುತನದ ಪರಿಣಾಮವನ್ನು ಅವರು ನಿರ್ವಹಿಸಿದ ಖಾತೆಗಳು ಮತ್ತು ಪಕ್ಷ ಮಾತ್ರ ಅನುಭವಿಸುತ್ತಿತ್ತು, ಈಗ ಇಡೀ ದೇಶ  ಅನುಭವಿಸುವಂತಾಗಿದೆ. ಮತ್ತೆ ಉಳಿದ ಮೂವರು ಕುಮಾರಿಯರಿಗೆ ಹೋಲಿಸುವುದಾದರೆ ಅವರೆಲ್ಲರಿಗಿಂತ ಮಮತಾ ಬ್ಯಾನರ್ಜಿ ಪ್ರಾಮಾಣಿಕರು ಮತ್ತು ಸರಳ ಜೀವಿ.

ಈ ಎರಡು ಗುಣಗಳನ್ನು ಸನ್ಯಾಸಿನಿ ಎಂದು ಹೇಳಿಕೊಳ್ಳುತ್ತಿರುವ ಉಮಾಭಾರತಿಯವರಲ್ಲಿಯೂ ಕಾಣಲಾಗದು, ಜಯಲಲಿತಾ ಮತ್ತು ಮಾಯಾವತಿ ಅವರಿಗೆ ಅಂಟಿಕೊಂಡಿರುವ ಭ್ರಷ್ಟಾಚಾರದ ಕಳಂಕ ಮತ್ತು ಐಷಾರಾಮಿ ಜೀವನದ ಶೋಕಿಗಳು ಮಮತಾ ಬ್ಯಾನರ್ಜಿ ಅವರಿಗಿಲ್ಲ. ರಾಜಕೀಯದಲ್ಲಿರುವ ಹೆಣ್ಣು-ಗಂಡು ಎಲ್ಲರನ್ನೂ ಸೇರಿಸಿ ಹೇಳುವುದಾದರೆ ಸರಳ ಜೀವನದ ವಿಷಯದಲ್ಲಿ ಮಮತಾ ಬ್ಯಾನರ್ಜಿಯವರಿಗೆ ಮತ್ತೊಬ್ಬರು ಸಾಟಿ ಇಲ್ಲ.

ಆದರೆ ಇವುಗಳ ಜತೆ ಮಾಯಾವತಿ ಮತ್ತು ಜಯಲಲಿತಾ ನಾಯಕಿಯರು ಬಿಗಿಯಾದ ಆಡಳಿತಕ್ಕಾಗಿಯೂ ಖ್ಯಾತಿ ಹೊಂದಿದವರು, ಆ ಸಾಮರ್ಥ್ಯ ಮಮತಾ ಬ್ಯಾನರ್ಜಿ ಅವರಲ್ಲಿಲ್ಲ. ಪಶ್ಚಿಮ ಬಂಗಾಳದ ಜನತೆ ಎಡಪಕ್ಷಗಳ ಮೇಲಿನ ಸಿಟ್ಟಿನಿಂದ ಮಮತಾ ಬ್ಯಾನರ್ಜಿ ಅವರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ, ಬೇರೆ ನಿರೀಕ್ಷೆಗಳೂ ಅವರಿಗೂ ಇದ್ದಿರಲಾರದು.

ಎಡಪಕ್ಷಗಳನ್ನು ಅಭಿವೃದ್ಧಿ ವಿರೋಧಿಗಳೆನ್ನುವುದಾದರೆ ಮಮತಾ ಬ್ಯಾನರ್ಜಿ ಯಾವ ಅಭಿವೃದ್ಧಿಯ ಹರಿಕಾರರು? ಅಭಿವೃದ್ಧಿಪರ ನಿಲುವು ಅವರ ಯಾವ ಮಾತು-ಕೃತಿಗಳಲ್ಲಿ ವ್ಯಕ್ತವಾಗಿದೆ? ಮೂರು ಬಾರಿ ರೈಲ್ವೆ ಸಚಿವರಾಗಿ, ಒಂದು ಬಾರಿ ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿ ಮಮತಾ ಬ್ಯಾನರ್ಜಿ ಮಾಡಿರುವ ಸಾಧನೆಗಳು ಯಾರ ನೆನಪಿನಲ್ಲಾದರೂ ಇವೆಯೇ?

ಮಮತಾ ಬ್ಯಾನರ್ಜಿ ಅವರು ಬುದ್ದಿವಂತೆಯಾಗಿದ್ದರೆ, ಪಶ್ಚಿಮ ಬಂಗಾಳದ ಜನತೆಯ ಬಗ್ಗೆ ಕಾಳಜಿ ಹೊಂದಿದ್ದರೆ ಕೇಂದ್ರ ಸರ್ಕಾರದ ಜತೆ ಕಾಲು ಕೆರೆದು ಜಗಳ ಮಾಡುತ್ತಿರಲಿಲ್ಲ. ಕನಿಷ್ಠ ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರ ಕಾರ್ಯಶೈಲಿಯನ್ನಾದರೂ ಅವರು ಅನುಸರಿಸಬಹುದಿತ್ತು.

ಎನ್‌ಡಿಎ ನಾಯಕತ್ವ ಹೊಂದಿರುವ ಬಿಜೆಪಿಯ ಎಲ್ಲ ನೀತಿ-ನಿರ್ಧಾರಗಳನ್ನು ನಿತೀಶ್‌ಕುಮಾರ್ ಈಗಲೂ ಒಪ್ಪುವುದಿಲ್ಲ. ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಬಿಹಾರಕ್ಕೆ ಕಾಲಿಡಲು ಅವರು ಬಿಟ್ಟಿಲ್ಲ. ಆದರೆ ಅದೇ ವೇಳೆ ಎನ್‌ಡಿಎ ಜತೆ ನೇರಾನೇರ ಗುದ್ದಾಟವನ್ನೂ ಅವರು ನಡೆಸುತ್ತಿಲ್ಲ.

ವಿರೋಧಪಕ್ಷವಾದ ಕಾಂಗ್ರೆಸ್ ಜತೆಯಲ್ಲಿಯೂ ಅವರು ಸಂಘರ್ಷಕ್ಕೆ ಇಳಿಯದೆ ರಾಜ್ಯದ ಅಭಿವೃದ್ಧಿಗೆ ಬೇಕಾದ ಕೇಂದ್ರದ ನೆರವನ್ನು ಉಪಾಯದಿಂದ ಪಡೆದುಕೊಂಡು ಸದ್ದಿಲ್ಲದಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ.

ಅಭಿವೃದ್ಧಿಯ ಮಾನದಂಡದಲ್ಲಿ ಬಿಹಾರಕ್ಕಿಂತ ಪಶ್ಚಿಮ ಬಂಗಾಳವೇನೂ ಬಹಳ ಮುಂದಿಲ್ಲ. ಅಲ್ಲಿನ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಬೇಕೆನ್ನುವ ತಮ್ಮ ಹಳೆಯ ಬೇಡಿಕೆಯನ್ನು ಮಮತಾ ಬ್ಯಾನರ್ಜಿಯವರೇ ಮರೆತುಬಿಟ್ಟಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿಯೂ ಅದರ ಉಲ್ಲೇಖ ಇದ್ದಂತಿಲ್ಲ. ಇಂತಹ ವಿಷಯಗಳನ್ನು ಮುಂದಿಟ್ಟು ಕಾಂಗ್ರೆಸ್ ಪಕ್ಷದ ಜತೆ ಚೌಕಾಶಿ ನಡೆಸಿದ್ದರೆ ಪಶ್ಚಿಮ ಬಂಗಾಳದ ಜನರಾದರೂ ಅವರ ಬೆಂಬಲಕ್ಕೆ ನಿಲ್ಲುತ್ತಿದ್ದರು.

ರಾಜಕೀಯವಾಗಿ ಪ್ರಜ್ಞಾವಂತರಾಗಿರುವ ಆ ರಾಜ್ಯದ ಜನತೆ ಮಮತಾ ಬ್ಯಾನರ್ಜಿ ಅವರ ಈಗಿನ ತಿಕ್ಕಲು ನಡವಳಿಕೆಯನ್ನು ಬಹಳ ದಿನ ಸಹಿಸಿಕೊಳ್ಳಲಾರರು. ಇದರಿಂದಾಗಿ ಎಡಪಕ್ಷಗಳು ಪೂರ್ಣವಾಗಿ ಐದು ವರ್ಷ ವಿರೋಧಪಕ್ಷದ ಸ್ಥಾನದಲ್ಲಿಯೇ ಕೂರಬೇಕಾದ ಪರಿಸ್ಥಿತಿ ಇರಲಾರದು.

ಮಮತಾ ಬ್ಯಾನರ್ಜಿ ಅವರಿಂದ ಬಿಡುಗಡೆ ಪಡೆಯಲು ಕಾಂಗ್ರೆಸ್ ಪಕ್ಷ ಹೂಡಿರುವ ತಂತ್ರ ಕೂಡಾ ಅಷ್ಟೇ ಆತ್ಮಹತ್ಯಾಕಾರಿಯಾದುದು. ಯಾವ ಪಕ್ಷದ ಬಲದಿಂದ ಕಾಂಗ್ರೆಸ್ ಪಕ್ಷ ಮಮತಾ ಬ್ಯಾನರ್ಜಿ ಅವರನ್ನು ಎದುರು ಹಾಕಿಕೊಳ್ಳಲು ಹೊರಟಿದೆಯೋ ಆ ಪಕ್ಷ ಇನ್ನೂ ಅಪಾಯಕಾರಿ.

ಬ್ಯಾನರ್ಜಿ ಮೂಲತಃ ಕಾಂಗ್ರೆಸಿನವರು, ಒಂದು ರೀತಿಯಲ್ಲಿ ಅವರು ಅರ್ಧ ಕಾಂಗ್ರೆಸ್. ಅಷ್ಟು ಮಾತ್ರವಲ್ಲ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡಮಟ್ಟದ ನಿರೀಕ್ಷೆಗಳೂ ಇಲ್ಲ. ಅಲ್ಲಿ ಅದು ಆಡಳಿತ ಪಕ್ಷವನ್ನು ಹಿಂಬಾಲಿಸಿಕೊಂಡು ಇರುವುದರಿಂದ ಅದಕ್ಕೆ ನಷ್ಟವೂ ಇಲ್ಲ.

ಆದರೆ ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಅಷ್ಟು ಸರಳವಾಗಿಲ್ಲ. ಕಾಂಗ್ರೆಸ್ ವಿರೋಧಿ ರಾಜಕಾರಣವನ್ನೇ ಮಾಡುತ್ತಾ ಬಂದ ಮುಲಾಯಂಸಿಂಗ್ ಯಾದವ್ ಬದಲಾಗುವುದು ಸಾಧ್ಯವೇ ಇಲ್ಲ.

ಇಷ್ಟು ಮಾತ್ರವಲ್ಲ ಉತ್ತರಪ್ರದೇಶವನ್ನು ಮರಳಿ ಗೆಲ್ಲಬೇಕೆಂಬ ಆಸೆಯನ್ನು ಕಾಂಗ್ರೆಸ್ ಹೇಗೆ ಬಿಟ್ಟುಕೊಟ್ಟಿಲ್ಲವೋ ಹಾಗೆ ತೃತೀಯ ರಂಗ ರಚನೆಯ ಪ್ರಯತ್ನವನ್ನು ಮುಲಾಯಂಸಿಂಗ್ ಯಾದವ್ ಅವರೂ ಕೈಬಿಟ್ಟಿಲ್ಲ. ಈ ಸ್ಥಿತಿಯಲ್ಲಿ ಸಮಾಜವಾದಿ ಪಕ್ಷದ ಜತೆಗಿನ ಮೈತ್ರಿ ಎಂದರೆ ಸೆರಗಲ್ಲಿ ಕೆಂಡ ಕಟ್ಟಿಕೊಂಡಂತೆ.

ಈಗಿನ ಬಿಕ್ಕಟ್ಟು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳಿಗಷ್ಟೇ ಸೀಮಿತವಾಗಿ ಕೊನೆಗೊಳ್ಳುವಂತಹದ್ದಲ್ಲ. ಈಗಿನದ್ದು ಮಾತ್ರವಲ್ಲ ಬಹುಶಃ ಮುಂದಿನದ್ದು ಕೂಡಾ ಮೈತ್ರಿಕೂಟದ ಯುಗ.

ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಯಾವ ಪಕ್ಷ ಕೂಡಾ ಸರಳ ಬಹುಮತಕ್ಕೆ ಬೇಕಾಗುವಷ್ಟು ಸ್ಥಾನಗಳನ್ನು ಗಳಿಸಲು ಸಾಧ್ಯವಾಗಲಾರದು. ಈ ವಾಸ್ತವವನ್ನು ಒಪ್ಪಿಕೊಂಡರೆ ಎಲ್ಲರಿಗೂ ಕ್ಷೇಮ.

ಬದಲಾಗಿರುವ ಕಾಲಕ್ಕೆ ತಕ್ಕ ಹಾಗೆ ಪಕ್ಷಗಳು ಮುಖ್ಯವಾಗಿ ಮೈತ್ರಿಕೂಟದ ನೇತೃತ್ವ ವಹಿಸಿರುವ ಪಕ್ಷ ತಮ್ಮ ರಾಜಕೀಯ ನಡವಳಿಕೆಗಳನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆ.

ಏಕಪಕ್ಷದ ಆಡಳಿತ ಸರ್ವಾಧಿಕಾರಕ್ಕೆ ದಾರಿಮಾಡಿಕೊಟ್ಟಂತೆ ಬಹುಪಕ್ಷಗಳಿಂದ ಕೂಡಿದ ಮೈತ್ರಿಕೂಟ  ಸದಾ ಕೇಂದ್ರ ನಾಯಕತ್ವವನ್ನು ದುರ್ಬಲಗೊಳಿಸಲು  ಪ್ರಯತ್ನಿಸುತ್ತಿರುತ್ತದೆ. ಮೈತ್ರಿಕೂಟದ ನಾಯಕತ್ವ ವಹಿಸಿದ್ದ ಪಕ್ಷ ದುರ್ಬಲವಾದಷ್ಟು ತಾವು ಸುರಕ್ಷಿತ ಎಂಬ ಭಾವನೆ ಪ್ರಾದೇಶಿಕ ಪಕ್ಷಗಳಲ್ಲಿದೆ.

ಯಾವ ಪ್ರಾದೇಶಿಕ ಪಕ್ಷ ಕೂಡಾ ಬಲಿಷ್ಠವಾದ ಕೇಂದ್ರ ಸರ್ಕಾರವನ್ನು ಬಯಸುವುದಿಲ್ಲ, ಅಂತಹ ಸರ್ಕಾರ ತಮ್ಮ ಹಿತಾಸಕ್ತಿಗೆ ಮಾರಕ ಎಂದು ಅವುಗಳು ಅನುಭವದ ಬಲದಿಂದ ತಿಳಿದುಕೊಂಡಿದೆ.

ಆದರೆ ಇಂತಹ ದುರ್ಬಲ ಕೇಂದ್ರ ಸರ್ಕಾರ ದೇಶದ ಹಿತಾಸಕ್ತಿಗೆ ಮಾರಕ. ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಮಾತ್ರವಲ್ಲ ದೇಶ ಕೂಡಾ ಎದುರಿಸಲಿರುವ ಬಹುದೊಡ್ಡ ಸವಾಲು ಇದು.

Sunday, March 18, 2012

ಕಾಲವನ್ನು ಮೀರಿ ಯೋಚಿಸಿದ್ದ ದಾರ್ಶನಿಕ ಅರಸು

`ಕಾಲದ ಜತೆ ಹೆಜ್ಜೆ ಹಾಕುವಾಗ ಒಂದಷ್ಟು ಹೆಜ್ಜೆ ಮುಂದೆ ಹೋಗಿಬಿಟ್ಟೆನೇನೋ ಎಂದು ಅನಿಸುತ್ತಿದೆ~ ಎಂದು ಖ್ಯಾತ ರಾಜಕೀಯ ಚಿಂತಕ ರಾಮಮನೋಹರ ಲೋಹಿಯಾ ಹೇಳಿದ್ದರು. ತನ್ನನ್ನು ಸಮಾಜವಾದಿ ಎಂದು ಘೋಷಿಸಿಕೊಳ್ಳದೆ  ಲೋಹಿಯಾ ಅವರ ಬಹಳಷ್ಟು ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬದುಕನ್ನು ನೋಡಿದಾಗಲೂ ಹೀಗೆಯೇ ಅನಿಸುತ್ತಿದೆ. ಪ್ರಾದೇಶಿಕ ಪಕ್ಷಗಳು ದೇಶದ ರಾಜಕಾರಣದ ದಿಕ್ಕು-ದೆಸೆಯನ್ನು ನಿರ್ಧರಿಸುವಷ್ಟು ನಿರ್ಣಾಯಕ ಪಾತ್ರ ವಹಿಸುತ್ತಿರುವ ಈ ಸಂದರ್ಭದಲ್ಲಿ ದೇವರಾಜ ಅರಸು ಪ್ರಾದೇಶಿಕ ರಾಜಕಾರಣದ ಮೂಲಕ ರಾಷ್ಟ್ರರಾಜಕಾರಣ ಪ್ರವೇಶಿಸಿದ್ದರೆ ಅವರ ಬದುಕು ದುರಂತದಲ್ಲಿ ಕೊನೆಗೊಳ್ಳುತ್ತಿರಲಿಲ್ಲವೇನೋ?
ಇದಕ್ಕಾಗಿ ಅರಸು ಅವರು 10-15ವರ್ಷಗಳ ನಂತರ ಹುಟ್ಟಬೇಕಿತ್ತು. ಅವರು ದೆಹಲಿ ಕಡೆ ಕತ್ತುಚಾಚಿದ್ದಾಗ ದೇಶದಲ್ಲಿ ಅದಕ್ಕೆ ಪೂರಕವಾದ ರಾಜಕೀಯ ವಾತಾವರಣ ಇರಲಿಲ್ಲ. ತುರ್ತುಪರಿಸ್ಥಿತಿಯ ನಂತರದ ಜನತಾ ಪ್ರಯೋಗದ ಕೇಂದ್ರ ಸ್ಥಾನದಲ್ಲಿದ್ದ ಕಾಂಗ್ರೆಸ್ ವಿರೋಧಿ ಗುಂಪಲ್ಲಿ ದೆಹಲಿ ಕೇಂದ್ರಿತ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.
ಅವರ‌್ಯಾರೂ ಪ್ರಾದೇಶಿಕ ರಾಜಕಾರಣದ ಉತ್ಪನ್ನಗಳಾಗಿರಲಿಲ್ಲ. ಆದ್ದರಿಂದ ಪ್ರಾದೇಶಿಕ ನಾಯಕನಾಗಿ ರಾಷ್ಟ್ರರಾಜಕಾರಣದಲ್ಲಿ ಕಾಣಿಸಿಕೊಳ್ಳುವ ಅವರ ಮಹತ್ವಾಕಾಂಕ್ಷೆ ಆ ಕಾಲವನ್ನು ಮೀರಿದ ಹೆಜ್ಜೆಯಾಗಿತ್ತು. ಇದು ಅರಸು ಅವರಿಗೂ ಗೊತ್ತಿತ್ತು. ಅವರ ಕೊನೆಯ ದೆಹಲಿ ಭೇಟಿಯ ಸಂದರ್ಭದಲ್ಲಿ (1982 ಮೇ, 25) ಆಗ ದೆಹಲಿಯ ವರದಿಗಾರರಾಗಿದ್ದ ಪ್ರಜಾವಾಣಿಯ ಡಿ.ವಿ.ರಾಜಶೇಖರ್ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಕೆ.ವಿ.ರಮೇಶ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಅರಸು ಇದನ್ನು ಒಪ್ಪಿಕೊಂಡಿದ್ದರು. `ವೈಯಕ್ತಿಕವಾಗಿ ಹೇಳುವುದಾದರೆ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯ ಸೊನ್ನೆ~ ಎಂದು ಪ್ರಶ್ನೆಯೊಂದಕ್ಕೆ ಅರಸು ಉತ್ತರಿಸಿದ್ದರು.
ದೇಶದಲ್ಲಿ ಪ್ರಾದೇಶಿಕ ರಾಜಕಾರಣವನ್ನು ಕೇಂದ್ರವಾಗಿಟ್ಟುಕೊಂಡ ಮೈತ್ರಿ ರಾಜಕಾರಣ ಪ್ರಾರಂಭವಾಗಿದ್ದು 1989ರ ನಂತರದ ದಿನಗಳಲ್ಲಿ. ಅದು ಪೂರ್ಣಪ್ರಮಾಣದಲ್ಲಿ ಬೆಳೆದದ್ದು 1996ರ ನಂತರ. ಅದರ ಫಲವಾಗಿಯೇ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಲು ಸಾಧ್ಯವಾಗಿದ್ದು. ಇದಕ್ಕೆ ನಿಧಾನವಾಗಿ ದುರ್ಬಲಗೊಳ್ಳುತ್ತಾ ಬಂದ ಕಾಂಗ್ರೆಸ್ ಪಕ್ಷ, ಆ ಸ್ಥಾನವನ್ನು ಆಕ್ರಮಿಸಿಕೊಳ್ಳುತ್ತಾ ಬಂದ ಪ್ರಾದೇಶಿಕ ಪಕ್ಷಗಳು, ಮಂಡಲ ವರದಿಯ ಜಾರಿಯ ನಂತರ ಹಿಂದುಳಿದ ಜಾತಿಗಳಲ್ಲಿ ಮೂಡಿದ ರಾಜಕೀಯ ಜಾಗೃತಿ-ಇವೆಲ್ಲ ಕಾರಣ. ದೇವರಾಜ ಅರಸು ಬದುಕಿದ್ದರೆ ಈ ಎಲ್ಲ ಬೆಳವಣಿಗೆಗಳು ಅವರ ರಾಜಕೀಯಕ್ಕೆ ಸಹಕಾರಿಯಾಗುತ್ತಿತ್ತು. ಆದರೆ ಆ ಅವಕಾಶವನ್ನು ಬಳಸಿಕೊಳ್ಳಲು ಅರಸು ಬದುಕುಳಿಯಲಿಲ್ಲ ಎನ್ನುವುದು ವಿಷಾದನೀಯ.
ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಇಲ್ಲದೆ ಸೊರಗಿದ್ದ ಹಿಂದುಳಿದ ಜಾತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ತಂದು ಕೊಡುವ ಅವರ ಯೋಚನೆ ಕೂಡಾ ಆ ಕಾಲವನ್ನು ಮೀರಿದ್ದಾಗಿತ್ತು. ಮಂಡಲ್ ವರದಿ ಅನುಷ್ಠಾನದ ಮೂಲಕ ಪ್ರಧಾನಿ ವಿ.ಪಿ.ಸಿಂಗ್ ರಾಷ್ಟ್ರಮಟ್ಟದಲ್ಲಿ ಆ ಯೋಚನೆ ಮಾಡಿದ್ದು ಹಾವನೂರು ವರದಿ ಜಾರಿಯಾದ ಹದಿನೈದು ವರ್ಷಗಳ ನಂತರ ಎನ್ನುವುದನ್ನು ಮರೆಯಬಾರದು. ಅರಸು ಕೇವಲ ಶಕ್ತಿರಾಜಕಾರಣವನ್ನು ಉದ್ದೇಶವಾಗಿಟ್ಟುಕೊಂಡ ಒಬ್ಬ ನಾಯಕರಾಗಿರಲಿಲ್ಲ ಅವರಲ್ಲೊಬ್ಬ ದಾರ್ಶನಿಕ ಇದ್ದ. ಅವರಿಗೆ ನಿಖರವಾದ ರಾಜಕೀಯ ಮತ್ತು ಸಾಮಾಜಿಕ ಮುನ್ನೋಟಗಳಿದ್ದವು. ರಾಜಕೀಯ ಅಧಿಕಾರ ಯಾಕೆ ಬೇಕು ಮತ್ತು ಅದರ ಮೂಲಕ ತಾವು ಮಾಡಬೇಕಾಗಿರುವುದು ಏನು ಎಂಬ ಬಗ್ಗೆ ಅವರಿಗೆ ಸ್ಪಷ್ಟ ಕಲ್ಪನೆ ಇತ್ತು.
1972ರ ವಿಧಾನಸಭಾ ಚುನಾವಣೆಗೆ ಪೂರ್ವದಲ್ಲಿಯೇ ಅದಕ್ಕೊಂದು ಭೂಮಿಕೆಯ ಸಿದ್ಧತೆಯಲ್ಲಿ ಅವರು ತೊಡಗಿದ್ದರು. ರಾಜ್ಯದಲ್ಲಿದ್ದ ಜಾತಿ ಸಮೀಕರಣವನ್ನು ಬದಲಾಯಿಸದೆ ಇದ್ದರೆ ತಾವು ಬಯಸಿರುವ ಪರಿವರ್ತನೆಯನ್ನು ಸಮಾಜದಲ್ಲಿ ತರಲು ಸಾಧ್ಯ ಇಲ್ಲ ಎನ್ನುವುದು ಅವರಿಗೆ ತಿಳಿದಿತ್ತು. ಇದಕ್ಕಾಗಿ ಅಲ್ಲಿಯವರೆಗೆ ನಿರ್ಲಕ್ಷಿತರಾಗಿ ಮೂಲೆ ಸೇರಿದ್ದ ಕೆಳಜಾತಿಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂಬ ನಿರ್ಧಾರಕ್ಕೆ ಬಂದಿದ್ದರು. ಆದರೆ ಇವೆಲ್ಲವನ್ನೂ ಸರಿಯಾದ ತಯಾರಿಯೊಂದಿಗೆ ಮಾಡಿ ಸಮರ್ಥರನ್ನು ಹುಡುಕಾಡುವಷ್ಟು ಸಮಯ ಅವರಿಗೆ ಇರಲಿಲ್ಲ. ಆದ್ದರಿಂದ ಕಣ್ಣಿಗೆ ಬಿದ್ದ ಹಿಂದುಳಿದ ಜಾತಿಗಳ ನಾಯಕರನ್ನು ಹುಡುಕಾಡಿ ತೆಗೆದು ಟಿಕೆಟ್ ಕೊಟ್ಟು ಜತೆಗೆ ದುಡ್ಡು ಕೊಟ್ಟು ಗೆಲ್ಲಿಸಿದರು. ಅಭ್ಯರ್ಥಿಗಳನ್ನು ಆರಿಸುವಾಗ ಈ ನಾಯಕರಿಗೆ ಇರುವ ಅರ್ಹತೆಯನ್ನು ಪರೀಕ್ಷೆಗೊಳಪಡಿಸುವಷ್ಟು ಪುರುಸೊತ್ತು ಅವರಿಗೆ ಇರಲಿಲ್ಲ.
 ಹಠಾತ್ತನೆ ಶಾಸಕರಾದವರಿಗೆ ಅರಸು ಅವರಿಗಿದ್ದ ರಾಜಕೀಯ ಚಿಂತನೆ, ಸಾಮಾಜಿಕ ಕಳಕಳಿ ಇಲ್ಲವೇ ದೂರದೃಷ್ಟಿ ಯಾವುದೂ ಇರಲಿಲ್ಲ. ಅವರಲ್ಲಿ ಬಹಳಷ್ಟು ಮಂದಿ ಮೂಲತಃ ಜಾತಿವಾದಿಗಳು, ಆಳದಲ್ಲಿ ಸ್ವಾರ್ಥಿಗಳು ಮತ್ತು ದುರ್ಬಲ ಮನಸ್ಸಿನವರಾಗಿದ್ದರು. ಅವರಲ್ಲಿ ಯಾರೂ ಹೋರಾಟದ ಮೂಲಕ ನಾಯಕರಾಗಿ ರೂಪುಗೊಂಡವರಲ್ಲ.
ಈ ಕಾರಣದಿಂದಾಗಿಯೇ ಮುಂದಿನ ದಿನಗಳಲ್ಲಿ ಅವರಲ್ಲಿ ಹೆಚ್ಚಿನವರು ಅವಕಾಶವಾದಿಗಳಾಗಿ, ಪಕ್ಷಾಂತರಿಗಳಾಗಿ ಬೆಳೆದರೇ ಹೊರತು ಅರಸು ಅವರಂತೆ ಪರಿವರ್ತನೆಯ ಹರಿಕಾರರಾಗಲಿಲ್ಲ. ಅರಸು ಅವರ ಈ `ಅವಸರದ ಕ್ರಾಂತಿ~ವಿಫಲಗೊಳ್ಳಲು ಇದು ಮುಖ್ಯ ಕಾರಣ. ಕೊನೆಗಾಲದಲ್ಲಿ ಅರಸು ಅವರು ಇಂದಿರಾ ಕಾಂಗ್ರೆಸ್‌ನಿಂದ ದೂರವಾಗಿ ರಾಜಕೀಯವಾಗಿ ಏಕಾಂಗಿಯಾದಾಗ ಅವರು ಬೆಳೆಸಿದವರಲ್ಲಿ ಯಾರೂ ಅವರ ಬೆಂಬಲಕ್ಕೆ ನಿಲ್ಲಲೇ ಇಲ್ಲ. ಅದಕ್ಕಿಂತಲೂ ಮುಖ್ಯವಾಗಿ ಮೀಸಲಾತಿ, ಭೂಸುಧಾರಣೆ ಮೊದಲಾದ ಅರಸು ಅವರ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ನಂತರದ ಸರ್ಕಾರಗಳು ತಿರುಚಿ ಸಾಯಿಸಿದಾಗ ಈ ನಾಯಕರಲ್ಲಿ ಯಾರೂ ಅದರ ವಿರುದ್ದ ದನಿ ಎತ್ತಲಿಲ್ಲ.
1995ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ದೇವೇಗೌಡರು ಕೈಗಾರಿಕೆಗಳಿಗೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಅವಕಾಶ ನೀಡುವಂತೆ ಭೂ ಸುಧಾರಣೆಗೆ ಮೊದಲ ತಿದ್ದುಪಡಿಯನ್ನು ತಂದರು. ಈ ತಿದ್ದುಪಡಿ ಮೊದಲು ಕೃಷಿ ಆಧರಿತ ಕೈಗಾರಿಕೆಗಳಿಗಾಗಿ ನಡೆಯುವ ಭೂಸ್ವಾಧೀನಕ್ಕೆ ಸೀಮಿತವಾಗಿದ್ದರೂ ನಂತರದ ದಿನಗಳಲ್ಲಿ ಅದನ್ನು ಇನ್ನಷ್ಟು ಸಡಿಲಗೊಳಿಸಲಾಯಿತು.

ಕೃಷಿ ಭೂಮಿ ಪಡೆಯಲು ನಿಗದಿಗೊಳಿಸಲಾಗಿದ್ದ ಆದಾಯದ ಮಿತಿ ಮತ್ತು ಒಬ್ಬ ವ್ಯಕ್ತಿ ಹೊಂದಿರಬಹುದಾದ ಜಮೀನಿನ ಗರಿಷ್ಠಮಿತಿಗಳೆರಡನ್ನೂ ತಿದ್ದುಪಡಿ ಮೂಲಕ ಹೆಚ್ಚಿಸಲಾಯಿತು. ಇದರಿಂದಾಗಿ ಅರಸು ಅವರ ಕಲ್ಪನೆಯ ಭೂಸುಧಾರಣೆಯ ಅಸ್ಥಿಪಂಜರವಷ್ಟೇ ಈಗ ಉಳಿದಿದೆ. ಹೀಗೆ ಅರಸು ನಂತರ ಬಂದ ಸರ್ಕಾರಗಳು ಭೂಸುಧಾರಣೆ ಕಾಯಿದೆಗೆ ತಿದ್ದುಪಡಿ ಮೇಲೆ ತಿದ್ದುಪಡಿಗಳನ್ನು ತಂದು ಕೆಡಿಸಿದಾಗ ಅರಸು ಅವರ ಅನುಯಾಯಿಗಳಲ್ಲಿ ಕೆಲವರು ಆಡಳಿತ ಪಕ್ಷದಲ್ಲಿ, ಇನ್ನು ಕೆಲವರು ವಿರೋಧಪಕ್ಷದಲ್ಲಿದ್ದರು.

ಯಾರಿಂದಲೂ ಒಂದು ಸಂಘಟಿತ ಪ್ರತಿರೋಧ ವ್ಯಕ್ತವಾಗಲಿಲ್ಲ. ರಾಜ್ಯದಲ್ಲಿರುವ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ಕೂಡಾ ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳು ಕಾಟಾಚಾರಕ್ಕಷ್ಟೆ ಉಳಿಸಿಕೊಂಡು ಹೋಗಿವೆ. ವಕೀಲ ಸಿ.ಎಸ್.ದ್ವಾರಕನಾಥ್ ಆಯೋಗದ ಅಧ್ಯಕ್ಷರಾಗಿದ್ದಾಗ ಈಗಿನ ಬಿಜೆಪಿ ಸರ್ಕಾರ ಅವರಿಗೆ ನಿರಂತರವಾಗಿ ಕಿರುಕುಳ ಕೊಟ್ಟಿತು. ಅವರು ತಯಾರಿಸಿದ್ದ ವರದಿಯ ಅನುಷ್ಠಾನ ಬಿಡಿ, ಯಾರಾದರೂ ಅದರ ಪುಟ ತಿರುವಿ ನೋಡಿದ್ದಾರೆಂದು ಅನಿಸುವುದಿಲ್ಲ. ಪ್ರೊ.ರವಿವರ್ಮಕುಮಾರ್ ಸಲ್ಲಿಸಿದ್ದ ವರದಿಗೂ ಇದೇ ಗತಿ ಆಗಿದೆ. ಅರಸು ಗರಡಿಯಲ್ಲಿ ಪಳಗಿದವರು, ತಮ್ಮನ್ನು `ಅಹಿಂದ~ ನಾಯಕನೆಂದು ಬಿಂಬಿಸಿಕೊಳ್ಳುವ ನೂರಾರು ನಾಯಕರು ನಮ್ಮಲ್ಲಿ ಇದ್ದಾರೆ. ಯಾರಾದರೂ ಪ್ರತಿಭಟನೆಯ ಸೊಲ್ಲು ಎತ್ತಿದ್ದಾರೆಯೇ?
ಅನುಯಾಯಿಗಳನ್ನು ಬಿಟ್ಟುಬಿಡಿ, ಯಾರಿಗಾಗಿ ಅವರು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದರೋ ಆ ಫಲಾನುಭವಿಗಳು ಕೂಡಾ ಅರಸು ಅವರ ಪರವಾಗಿ ನಿಲ್ಲಲಿಲ್ಲ. ಇದಕ್ಕೆ ಕೂಡಾ ಅರಸು ಅವರ ಕಾಲವನ್ನು ಮೀರಿದ ಚಿಂತನೆ ಕಾರಣ. ಅರಸು ಕ್ರಾಂತಿಯ ಫಲಾನುಭವಿಗಳ ಪಾಲಿಗೆ ಬಯಸಿದ್ದು ಮಾತ್ರವಲ್ಲ ಬಯಸದೆ ಇದ್ದದ್ದು ಕೂಡಾ ನಿರಾಯಾಸವಾಗಿ ಬಂತು. ಕಾಗೋಡು ಸತ್ಯಾಗ್ರಹವೊಂದನ್ನು ಹೊರತುಪಡಿಸಿ ಭೂ ಒಡೆತನಕ್ಕಾಗಿ ರಾಜ್ಯದಲ್ಲಿ ಎಲ್ಲಿಯೂ ದೊಡ್ಡಮಟ್ಟದ ಹೋರಾಟಗಳೇ ನಡೆದಿಲ್ಲ.
ಕೇಂದ್ರ ಸರ್ಕಾರ ಮಂಡಲ ವರದಿ ಅನುಷ್ಠಾನಕ್ಕೆ ತಂದಾಗ ಪರ-ವಿರೋಧವಾಗಿ ನಡೆದ ಚಳವಳಿಗಳೇನೂ ಹಾವನೂರು ಆಯೋಗದ ವರದಿ ಅನುಷ್ಠಾನದ ಹಿಂದೆಮುಂದೆ ನಡೆದಿರಲಿಲ್ಲ. ಆದ್ದರಿಂದ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಮೀಸಲಾತಿ ಇರಬಹುದು.
ಗೇಣಿದಾರರಿಗೆ ಸಿಕ್ಕ ಭೂ ಒಡೆತನ ಇರಬಹುದು, ಮಲಹೊರುವ ಪದ್ದತಿಯ ನಿಷೇಧ, ಜೀತ ನಿರ್ಮೂಲನೆ, ಋಣ ಪರಿಹಾರದ ಕಾರ್ಯಕ್ರಮಗಳಿರಬಹುದು. ಇವೆಲ್ಲವೂ ಬೆವರು-ಕಣ್ಣೀರು ಸುರಿಸದೆ ಸುಲಭದಲ್ಲಿ ಲಾಟರಿ ಹೊಡೆದಂತೆ ಸಿಕ್ಕಿಬಿಟ್ಟವು. ಈ ರೀತಿ ಸುಲಭದಲ್ಲಿ, ಪುಕ್ಕಟೆಯಾಗಿ ಸಿಕ್ಕರೆ ಅದರ ಮಹತ್ವ ಗೊತ್ತಾಗುವುದಿಲ್ಲ. ಪುಕ್ಕಟೆಯಾಗಿ ಪಡೆದದ್ದನ್ನು ಕಳೆದುಕೊಂಡರೂ ಯಾರಿಗೂ ಏನೂ ಅನಿಸುವುದಿಲ್ಲ, ಆದರೆ ದುಡಿದು ಗಳಿಸಿದ್ದನ್ನು ಕಳೆದುಕೊಂಡರೆ ಹೊಟ್ಟೆ ಉರಿಯುತ್ತದೆ ಅಲ್ಲವೇ ಹಾಗೆ.

ಅರಸು ಅವತಾರಪುರುಷನಂತೆ ಕಾಣಿಸಿಕೊಂಡು ಕೇಳಿದ್ದು-ಕೇಳದಿರುವುದು ಎಲ್ಲವನ್ನೂ ಕೊಟ್ಟು ಮಿಂಚಿ ಮರೆಯಾಗಿ ಹೋದ ಕಾರಣ ಅವರಿಂದ ಲಾಭಪಡೆದವರಿಗೂ ಅವರನ್ನು ಅರ್ಥಮಾಡಿಕೊಳ್ಳಲಾಗಲಿಲ್ಲ. ಬಹಳ ಮಂದಿಗೆ ಅದು ಬೇಕಾಗಿಯೂ ಇಲ್ಲ. ಇದು ನಿಜವಾದ ದುರಂತ.
ಇತ್ತೀಚೆಗೆ ನಾನು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ನಡೆಸಿದ್ದ ವಿಚಾರಸಂಕಿರಣಕ್ಕೆ ಹೋಗಿದ್ದೆ. ನಾನು ಮಾತನಾಡಿದ ನಂತರ ಸಭೆಯಲ್ಲಿದ್ದ ಹಿರಿಯ ಪತ್ರಕರ್ತರೊಬ್ಬರು ಪ್ರತಿಕ್ರಿಯಿಸಿ `ಕೆಲವು ದಿನಗಳ ಹಿಂದೆ ಹಿಂದುಳಿದ ಜಾತಿಗೆ ಸೇರಿರುವ ಬಳ್ಳಾರಿಯ ಶಾಸಕರೊಬ್ಬರು ನಡುರಾತ್ರಿಯಲ್ಲಿ ಫೋನ್ ಮಾಡಿ ನನ್ನನ್ನು ಎಬ್ಬಿಸಿ ದೇವರಾಜ ಅರಸು ಬಗ್ಗೆ ಸ್ಪಲ್ಪ ಹೇಳಿ ಎಂದರು.

ಮರುದಿನ ಅರಸು ಕುರಿತ ಕಾರ್ಯಕ್ರಮವೊಂದರಲ್ಲಿ ಅವರು ಭಾಷಣ ಮಾಡಬೇಕಿತ್ತಂತೆ. ಹಿಂದುಳಿದ ಜಾತಿಗಳ ನಾಯಕರಿಗೆ ಏನು ಗತಿ ಬಂತು ನೋಡಿ~ ಎಂದು ನಕ್ಕರು, ಸಭೆಯಲ್ಲಿದ್ದವರೆಲ್ಲರೂ ಕೂಡಿ ನಕ್ಕರು. ಆ ಶಾಸಕನ ಹೆಸರು ಶ್ರಿರಾಮುಲು. ಇವರು ಹಿಂದುಳಿದ ಜಾತಿಗಳ ಲೇಟೆಸ್ಟ್ ನಾಯಕ. ಅರಸು ಅವರ ಆತ್ಮ ತಣ್ಣಗಿರಲಿ.

Monday, March 12, 2012

ತೃತೀಯರಂಗ ಎಂಬ ಮರೀಚಿಕೆಯ ಬೆನ್ನತ್ತಿ.... March 12, 2012


ಯಾವುದೋ ಒಂದು ರಾಜ್ಯದಲ್ಲಿ ಕಾಂಗ್ರೆಸ್ ಇಲ್ಲವೇ ಬಿಜೆಪಿಯನ್ನು ಬಿಟ್ಟು ಬೇರೊಂದು ಪ್ರಾದೇಶಿಕ ಪಕ್ಷ ಚುನಾವಣೆಯಲ್ಲಿ ಗೆದ್ದ ಕೂಡಲೇ ನಾಲ್ಕು ದಿಕ್ಕುಗಳಿಂದಲೂ ತೃತೀಯರಂಗದ ಗಂಟೆಗಳು ಮೊಳಗತೊಡಗುತ್ತವೆ. ಒಂದು ಕಾಲದಲ್ಲಿ ಈ ಗಂಟೆ ಆಡಿಸುತ್ತಿದ್ದವರು ಸಿಪಿಎಂ ಪಕ್ಷದ ನಾಯಕ ಹರಿಕಿಷನ್‌ಸಿಂಗ್ ಸುರ್ಜಿತ್.  ಬದುಕಿದ್ದರೆ ದೆಹಲಿಯಲ್ಲಿದ್ದ ಅವರ ಮನೆ ಈಗ ತೃತೀಯರಂಗದ ತಥಾಕಥಿತ ನಾಯಕರಿಂದ ತುಂಬಿ ತುಳುಕಾಡುತ್ತಿತ್ತೋ ಏನೋ? ಸುರ್ಜಿತ್ ನಂತರ ಅವರ ಚಪ್ಪಲಿಯಲ್ಲಿ ಕಾಲುತೂರಿ ಹೊರಟವರು ಮುಲಾಯಂ ಸಿಂಗ್ ಯಾದವ್. ಇದರಿಂದಾಗಿಯೇ ಉತ್ತರಪ್ರದೇಶದ ಚುನಾವಣೆಯ ನಂತರ ತೃತೀಯ ರಂಗದ ಆಶಾವಾದಿಗಳು ಮೈಮುರಿದು ಎದ್ದು ಕೂತಿದ್ದಾರೆ. ಆಗಲೇ ಮಾಧ್ಯಮಗಳು ತೃತೀಯರಂಗವನ್ನು ರಾಜಕೀಯ ಚರ್ಚೆಯ ಕೇಂದ್ರಸ್ಥಾನದಲ್ಲಿ ತಂದು ನಿಲ್ಲಿಸಿವೆ. ವಾಸ್ತವ ಸಂಗತಿ ಏನೆಂದರೆ, ಸದ್ಯದ ಭವಿಷ್ಯದಲ್ಲಿ ತೃತೀಯರಂಗ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ ಇಲ್ಲ. ಇನ್ನೂ ಸ್ವಲ್ಪ ಹುಂಬ ಧೈರ್ಯದಿಂದ ಹೇಳುವುದಾದರೆ ಭಾರತದಲ್ಲಿ ಕನಿಷ್ಠ ಮುಂದಿನ ಹತ್ತು ವರ್ಷ ತೃತೀಯರಂಗಕ್ಕೆ ಭವಿಷ್ಯ ಇಲ್ಲ.
ಈ ಸತ್ಯ ತೃತೀಯರಂಗದ ಪ್ರತಿಪಾದಕರೆಲ್ಲರಿಗೂ ಗೊತ್ತು, ಹೀಗಿದ್ದರೂ ಅವರು ತೃತೀಯ ರಂಗದ ಕನಸುಗಳನ್ನು ತುಂಬಿದ ಬಣ್ಣಬಣ್ಣದ ಬಲೂನ್‌ಗಳ ಮಾರಾಟವನ್ನು ನಿಲ್ಲಿಸುವುದಿಲ್ಲ, ಆ ಕನಸುಗಳ ಬಲೂನ್ ಎಷ್ಟು ಬಾರಿ ಒಡೆದುಹೋದರೂ ಅದನ್ನು ಒಂದಷ್ಟು ಜನ ಕೊಂಡು ಕೊಳ್ಳುವುದನ್ನೂ ನಿಲ್ಲಿಸುವುದಿಲ್ಲ. ಮೊದಲನೆಯದಾಗಿ, ತೃತೀಯರಂಗದ ಸ್ವರೂಪದ ಬಗ್ಗೆಯೇ ನಮ್ಮಲ್ಲಿ ಬಹಳಷ್ಟು ಗೊಂದಲಗಳಿವೆ. ಮೂಲ ಅರ್ಥದ ಪ್ರಕಾರ ತೃತೀಯರಂಗ ಎನ್ನುವುದು ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ದೂರ ಇರುವ ಪಕ್ಷಗಳ ಒಕ್ಕೂಟ. ಈ ದೂರ ತತ್ವದ ಆಧಾರದ್ದು. ಆದರೆ ಬಹುತೇಕ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳನ್ನು ವಿರೋಧಿಸುತ್ತಾ ವಿರೋಧಿಸುತ್ತಾ ಕೊನೆಗೆ ಅವುಗಳ ಗುಣಲಕ್ಷಣಗಳನ್ನೇ ಮೈಗೂಡಿಸಿಕೊಂಡಿವೆ. ಕಾಂಗ್ರೆಸ್ ಪಕ್ಷದ ಸರ್ವಾಧಿಕಾರಿ ಧೋರಣೆ ಮತ್ತು ವಂಶಪರಂಪರೆಯನ್ನು ವಿರೋಧಿಸಿಯೇ 1977ರಲ್ಲಿ  ಪರ್ಯಾಯ ಹುಟ್ಟಿಕೊಂಡದ್ದು. ಆದರೆ ಉತ್ತರಪ್ರದೇಶದಲ್ಲಿ ಈಗ ನಡೆಯುತ್ತಿರುವುದೇನು?
ಈಗಿನ ವಿಜಯೋತ್ಸಾಹದ ಭರದಲ್ಲಿ ಮಾಧ್ಯಮಗಳು ಸೇರಿದಂತೆ ಎಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಎರಡು ಮುಖ್ಯ ಅನಿಷ್ಟಗಳಾದ ವಂಶಪರಂಪರೆಯ ಮುಂದುವರಿಕೆ ಮತ್ತು ಆಂತರಿಕ ಪ್ರಜಾಪ್ರಭುತ್ವದ ದಮನ, ಸಮಾಜವಾದಿ ಪಕ್ಷದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಬಗ್ಗೆ ಕುರುಡರಾಗಿದ್ದಾರೆ. ಮಗನಿಗೆ ಪಟ್ಟ ಕಟ್ಟುವ ಅವಸರದಲ್ಲಿರುವ ಮುಲಾಯಂಸಿಂಗ್ ಯಾದವ್, ಪಕ್ಷ ಕಟ್ಟಲು ಬೆವರು ಸುರಿಸಿದ ಹಿರಿಯ ನಾಯಕರನ್ನು ಮೂಲೆಗೆ ತಳ್ಳಿದ್ದಾರೆ. ಅದು ನಿಜವಾದ ಅರ್ಥದಲ್ಲಿ `ತಂದೆ-ಮಗ`ನ ಪಕ್ಷವಾಗಿ ಹೋಗಿದೆ.  `ಲೋಹಿಯಾ ಕೆ ಸಾಥ್` ಎಂಬ ಬ್ಯಾನರ್-ಪೋಸ್ಟರ್‌ಗಳ ಮೂಲಕ ಚುನಾವಣಾ ಪ್ರಚಾರ ನಡೆಸಿದ ಸಮಾಜವಾದಿ ಪಕ್ಷ, ರಾಜಕೀಯದಲ್ಲಿ ವಂಶಪರಂಪರೆಯನ್ನು ಲೋಹಿಯಾ ವಿರೋಧಿಸಿದ್ದರು ಎನ್ನುವುದನ್ನು ಜಾಣತನದಿಂದ ಮರೆತುಬಿಟ್ಟಿದೆ.
ತತ್ವದ ವಿಚಾರವನ್ನು ಪಕ್ಕಕ್ಕಿಟ್ಟು ಸಂಖ್ಯೆಯನ್ನಷ್ಟೇ ಗಮನಕ್ಕೆ ತೆಗೆದುಕೊಳ್ಳುವುದಾದರೆ ತೃತೀಯರಂಗ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಎರಡು ರಾಷ್ಟ್ರೀಯ ಪಕ್ಷಗಳ ಬೆಂಬಲ ಇಲ್ಲದೆ ಸಾಮಾನ್ಯ ಬಹುಮತಕ್ಕೆ ಬೇಕಾಗಿರುವ 272 ಸದಸ್ಯರ ಸ್ವಂತ ಬಲವನ್ನು ಗಳಿಸಬೇಕು. 1952ರಿಂದ 2004ರ ವರೆಗಿನ ದೇಶದ ಚುನಾವಣಾ ಇತಿಹಾಸವನ್ನು ನೋಡಿದರೆ 1977ರ ಚುನಾವಣೆಯೊಂದನ್ನು (ಕಾಂಗ್ರೆಸ್ 154+ ಜನಸಂಘ 93=247) ಹೊರತುಪಡಿಸಿ ಬೇರೆ ಯಾವುದರಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿಯ ಒಟ್ಟು ಬಲ 272ಕ್ಕಿಂತ ಕೆಳಗೆ ಇಳಿದಿಲ್ಲ. ಕನಿಷ್ಠ ಎಂದರೆ 1989ರಲ್ಲಿ ಈ ಎರಡು ಪಕ್ಷಗಳು ಒಟ್ಟಾಗಿ ಗಳಿಸಿದ್ದ 282 ಸ್ಥಾನಗಳು. ಅಂದರೆ 1977ರ ಚುನಾವಣೆಯೊಂದನ್ನು ಬಿಟ್ಟು ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ಒಟ್ಟು ಸದಸ್ಯ ಬಲ ಎಂದೂ 272 ತಲುಪಿಲ್ಲ. 1991ರ ಲೋಕಸಭಾ ಚುನಾವಣೆಯನ್ನು ಹೊರತುಪಡಿಸಿದರೆ ಈ ಎರಡು ಪಕ್ಷಗಳು ಅತ್ಯಧಿಕ ಸ್ಥಾನಗಳನ್ನು ಗೆದ್ದಿರುವುದು 2009ರ ಚುನಾವಣೆಯಲ್ಲಿ (ಕಾಂಗ್ರೆಸ್ 206+ಬಿಜೆಪಿ 114=320). ಹೀಗಿದ್ದಾಗ ಈ ಎರಡೂ ಪಕ್ಷಗಳನ್ನು ಹೊರಗಿಟ್ಟ ತೃತೀಯರಂಗ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ?
`ಅಂತರ ಇರುವುದು 40-50 ಸ್ಥಾನಗಳಲ್ಲವೇ? ಅದನ್ನು ಗಳಿಸುವುದು ಅಷ್ಟೇನೂ ಕಷ್ಟವಾಗಲಾರದು. ಉತ್ತರಪ್ರದೇಶದಲ್ಲಿಯೇ ಅದನ್ನು ಪಡೆದುಕೊಳ್ಳಬಹುದು` ಎಂದು ಯಾರೋ ಕಡು ಆಶಾವಾದಿಗಳು ಹೇಳಬಹುದು. ಅದು ಕೂಡಾ ನಿಜವಾಯಿತೆಂದು ತಿಳಿದುಕೊಳ್ಳಿ, ಆಗಲೂ ತೃತೀಯರಂಗ ಅಧಿಕಾರಕ್ಕೆ ಬರಲು ಸಾಧ್ಯವಾಗಲಾರದು. ಇದಕ್ಕೆ ಕಾರಣ ತೃತೀಯ ರಂಗದೊಳಗಿರುವ ಪಕ್ಷಗಳ ನಡುವಿನ ಬಿಕ್ಕಟ್ಟು. ಇದನ್ನು ಉತ್ತರಪ್ರದೇಶದಿಂದಲೇ ಪ್ರಾರಂಭಿಸೋಣ. ಅಲ್ಲಿರುವ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಒಟ್ಟಾಗಿ ಒಂದೇ ಸರ್ಕಾರದಲ್ಲಿ ಸೇರಿಕೊಳ್ಳಲು ಸಾಧ್ಯವೇ? ಅದೇ ರೀತಿ, ತಮಿಳುನಾಡಿನ ಡಿಎಂಕೆ ಮತ್ತು ಎಐಎಡಿಎಂಕೆ, ಬಿಹಾರದ ಜೆಡಿ (ಯು) ಮತ್ತು ಆರ್‌ಜೆಡಿ, ಪಶ್ಚಿಮಬಂಗಾಳದ ಎಡಪಕ್ಷಗಳು ಮತ್ತು ಟಿಎಂಸಿ, ಕಾಶ್ಮೀರದ ನ್ಯಾಷನಲ್ ಕಾನ್‌ಫರೆನ್ಸ್ ಮತ್ತು ಪಿಡಿಪಿ, ಆಂಧ್ರಪ್ರದೇಶದಲ್ಲಿ ತೆಲುಗುದೇಶಂ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಒಟ್ಟಾಗಿ ಒಂದು ಮೈತ್ರಿಕೂಟದಡಿ ಇರಲು ಸಾಧ್ಯವೇ? ತೃತೀಯರಂಗದ ಆಶಾವಾದಿಗಳು ಎಷ್ಟೇ ಬೊಬ್ಬಿಟ್ಟರೂ ಅಂತಿಮವಾಗಿ ಅವರು ಒಂದೋ ಕಾಂಗ್ರೆಸ್ ನೇತೃತ್ವದ ಯುಪಿಎ ಜತೆ ಇಲ್ಲವೇ ಬಿಜೆಪಿ ನೇತೃತ್ವದ ಎನ್‌ಡಿಎ ಜತೆ ಸೇರಿಕೊಳ್ಳಲೇಬೇಕು. ಅದನ್ನು ತೃತೀಯರಂಗ ಎಂದು ಕರೆಯಲು ಹೇಗೆ ಸಾಧ್ಯ? ಇನ್ನೂ ಹುಟ್ಟದ ತೃತೀಯರಂಗದ ಗಾಳಿಪಟ ಹಾರುತ್ತಿರುವುದನ್ನು ನೋಡಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮರೆಯಲ್ಲಿ ನಿಂತು ನಗುತ್ತಿರುವುದು ಈ ಕಾರಣಕ್ಕೆ. ಕೊನೆಗೂ ಈ ನಾಯಕರು ನಮ್ಮ ಮನೆ ಬಾಗಿಲು ತಟ್ಟಲೇ ಬೇಕು ಎಂದು ಅವರಿಗೆ ಗೊತ್ತಿದೆ.
ಈ ಹಿನ್ನೆಲೆಯಲ್ಲಿ 2014ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ಮತ್ತು ನಂತರದಲ್ಲಿ ಕುತೂಹಲದಿಂದ ನೋಡಬೇಕಾಗಿರುವುದು ತೃತೀಯರಂಗದ ಹುಟ್ಟು-ಬೆಳವಣಿಗೆಯಲ್ಲ, ಅದು ಯುಪಿಎ ಇಲ್ಲವೇ ಎನ್‌ಡಿಎ-ಇವುಗಳಲ್ಲಿ ಯಾವ ರಂಗದ ಬಲವರ್ಧನೆಯಾಗಲಿದೆ ಎನ್ನುವುದನ್ನು. ಈಗಿನ ಬಲಾಬಲದಲ್ಲಿ ಕಾಂಗ್ರೆಸ್ (206) ನೇತೃತ್ವದ ಯುಪಿಎನಲ್ಲಿ, ತೃಣಮೂಲ ಕಾಂಗ್ರೆಸ್ (19), ಡಿಎಂಕೆ (18), ಎನ್‌ಸಿಪಿ (9) ಮತ್ತು ಇತರ ಸಣ್ಣಪಕ್ಷಗಳು (21) ಇವೆ. ಎಸ್‌ಪಿ (22), ಬಿಎಸ್‌ಪಿ (21) ಮತ್ತು ಇತರ ಸಣ್ಣಪಕ್ಷಗಳು (7) ಅದಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿವೆ. ಅದೇ ರೀತಿ, ಬಿಜೆಪಿ (114) ನೇತೃತ್ವದ ಎನ್‌ಡಿಎನಲ್ಲಿ ಜೆಡಿ (ಯು) (20) ಮತ್ತು ಇತರ ಸಣ್ಣಪಕ್ಷಗಳು (15) ಇವೆ. ಇವುಗಳ ಜತೆಗೆ ಈ ಎರಡೂ ಗುಂಪಿಗೂ ಸೇರದ ಸಿಪಿಎಂ (16), ಬಿಜೆಡಿ (14), ಎಐಎಡಿಎಂಕೆ (9) ಮತ್ತು ಇತರ ಪಕ್ಷಗಳು (26) ಇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಪಕ್ಷಗಳ ಬಲಾಬಲ ಏನಾಗಲಿದೆ ಎಂಬುದರ ಮೇಲೆ ಯಾವ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎನ್ನುವುದು ನಿರ್ಧಾರವಾಗಬಹುದು.
ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿಯೇನಾದರೂ ಕನಿಷ್ಠ 80-100 ಸ್ಥಾನಗಳನ್ನು ಗಳಿಸಿದ್ದರೆ ಆ ಗೆಲುವು ಎನ್‌ಡಿಎ ಬಲವರ್ಧನೆಗೆ ಚಾಲನೆ ನೀಡುತ್ತಿತ್ತೋ ಏನೋ? ಈಗಿನ ಪರಿಸ್ಥಿತಿಯಲ್ಲಿ ಹೆಚ್ಚು ಅನುಕೂಲಗಳಿರುವುದು ಯುಪಿಎಗೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ನಾಯಕರಲ್ಲಿ ಮುಲಾಯಂಸಿಂಗ್ ಯಾದವ್ ಸೇರಿದಂತೆ ಆಂತರಿಕವಾಗಿ ಹೆಚ್ಚಿನವರ ಒಲವು ಇರುವುದು ಎನ್‌ಡಿಎ ಕಡೆಗೆ. ಇದಕ್ಕೆ ವಾಜಪೇಯಿ ನೇತೃತ್ವದ ಆರು ವರ್ಷಗಳ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ನಾಯಕರು ಮಿತ್ರಪಕ್ಷಗಳನ್ನು ನಡೆಸಿಕೊಂಡ ರೀತಿ ಮೊದಲ ಕಾರಣ. ಬೇರೆ ಪಕ್ಷಗಳಿಗೆ ಎಷ್ಟು ಜಾಗ ಮತ್ತು ಅವಕಾಶವನ್ನು ಕೊಡಬೇಕೆಂದು ಆ ಪಕ್ಷದ ನಾಯಕರಿಗೆ ಗೊತ್ತಿದೆ. ಆದುದರಿಂದಲೇ ಬಿಜೆಪಿಯ ಕೇಂದ್ರನಾಯಕರೊಂದಿಗೆ ಜಗಳವಾಡಿಕೊಂಡು ಎನ್‌ಡಿಎಯಿಂದ ಹೊರಹೋದ ಪಕ್ಷಗಳು ಕಡಿಮೆ. ಹೆಚ್ಚಿನವರು ಎನ್‌ಡಿಎ ಜತೆ ಸಂಬಂಧ ಕಡಿದುಕೊಂಡಿದ್ದು ಮುಖ್ಯವಾಗಿ ತಮ್ಮ ರಾಜ್ಯದಲ್ಲಿನ ಮುಸ್ಲಿಂ ಮತದಾರರನ್ನು ಕಳೆದುಕೊಳ್ಳಬಹುದೆಂಬ ಭಯದಿಂದ. ಇನ್ನು ಕೆಲವು ಪಕ್ಷಗಳು ರಾಜ್ಯಮಟ್ಟದ ಬಿಜೆಪಿ ನಾಯಕರ ಜತೆಗಿನ ಸಂಘರ್ಷದ ಕಾರಣಕ್ಕೆ ದೂರವಾಗಿವೆ.
ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್ ದುರಹಂಕಾರಿ ಮತ್ತು ಸರ್ವಾಧಿಕಾರಿ ಧೋರಣೆಯನ್ನು ಮೈಗೂಡಿಸಿಕೊಂಡ ಪಕ್ಷ. ಏಕಚಕ್ರಾಧಿಪತ್ಯವನ್ನು ಅದು ಎಂದೋ ಕಳೆದುಕೊಂಡಿದ್ದರೂ ಆ ಗುಂಗಿನಿಂದ ಹೊರಬಂದಿಲ್ಲ. ಅದಕ್ಕೆ ಪ್ರತಿಯೊಂದು ಮಿತ್ರಪಕ್ಷಗಳ ಬೆಳವಣಿಗೆಯಲ್ಲಿಯೂ ತನ್ನ ವಿರುದ್ಧದ ಸಂಚು ಕಾಣಿಸುತ್ತದೆ. ಯುಪಿಎ ಯಲ್ಲಿ ಈಗ ಇರುವ ಟಿಎಂಸಿ, ಡಿಎಂಕೆ ಇಲ್ಲವೇ ಎನ್‌ಸಿಪಿ ಯಾವ ಪಕ್ಷದ ಜತೆಯಲ್ಲಿಯೂ ಕಾಂಗ್ರೆಸ್ ಸಂಬಂಧ ಸೌಹಾರ್ದವಾಗಿಲ್ಲ. ಬೇರೆ ದಾರಿ ಇಲ್ಲದೆ ಈ ಪಕ್ಷಗಳು ಯುಪಿಎ ಜತೆಯಲ್ಲಿವೆ. ಮೂಲತಃ ಕಾಂಗ್ರೆಸ್ ವಿರೋಧಿಯಾಗಿರುವ ಮುಲಾಯಂಸಿಂಗ್ ಯಾದವ್ ಅವರಿಗೆ ಇದು ಚೆನ್ನಾಗಿ ಗೊತ್ತು. ದುರಂತವೆಂದರೆ ಈಗಲೂ ಅವರು ಯಾವುದಾದರೂ ರಾಷ್ಟ್ರೀಯ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಸಾಧ್ಯ ಇದ್ದರೆ ಅದು ತಾನು ವೈಯಕ್ತಿಕವಾಗಿ ಒಲ್ಲದ ಆದರೆ ರಾಜಕೀಯವಾಗಿ ಅನಿವಾರ್ಯವಾಗಿರುವ ಯುಪಿಎ ಜತೆ ಮಾತ್ರ. ಎನ್‌ಡಿಎ ಜತೆ ಕೂಡಿಕೊಂಡರೆ  ಅವರು ಮತ್ತೊಮ್ಮೆ ಮುಸ್ಲಿಮರ ವಿಶ್ವಾಸವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದರಿಂದಾಗಿ ಈ ಚುನಾವಣೆಯಲ್ಲಿ ಗಳಿಸಿರುವ ಹೆಚ್ಚುವರಿ ನಾಲ್ಕುವರೆಯಷ್ಟು ಮತಗಳು ಕೈಜಾರಿ ಹೋಗಬಹುದು. ಆದುದರಿಂದ ಉತ್ತರಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ತೃತೀಯರಂಗದ ಬಲವರ್ಧನೆಗೆ ನೆರವಾಗುವ ಸಾಧ್ಯತೆ ಇಲ್ಲ.
ಉತ್ತರ ಪ್ರದೇಶದ ಮತದಾರರಂತೆ ದೇಶದ ಮತದಾರರು ಕೂಡಾ ತ್ರಿಶಂಕು ಸ್ಥಿತಿ ಬೇಡವೇ ಬೇಡ ಎಂದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏನಾದರೂ ತೀರ್ಮಾನಿಸಿದರೂ ಅದರ ಲಾಭ ಎರಡರಲ್ಲಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಸಿಗಬಹುದೇ ಹೊರತು, ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚು ಸಿಗಲಾರದು. ಒಂದು ವೇಳೆ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಜನ ತಿರಸ್ಕರಿಸಿ ಅವುಗಳ ಬಲ ತೀರಾ ಕುಸಿದು ಬಿಟ್ಟರೆ, ಆಗ ತೃತೀಯರಂಗಕ್ಕೆ ಸ್ವಂತ ಬಲದಿಂದ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೂ ಯಾವುದಾದರೂ ಒಂದು ರಾಷ್ಟ್ರೀಯ ಪಕ್ಷದ ಬೆಂಬಲ ಪಡೆದು ತೃತೀಯ ರಂಗದ ನಾಯಕನೊಬ್ಬ ಪ್ರಧಾನಮಂತ್ರಿಯಾಗಲು ಸಾಧ್ಯ. ಅಂತಹ ಸಂದರ್ಭದಲ್ಲಿ  ಇಬ್ಬರ ಅವಕಾಶ ಉಜ್ವಲವಾಗಿದೆ. ಮೊದಲನೆಯವರು ನಿತೀಶ್‌ಕುಮಾರ್, ಎರಡನೆಯವರು ಮುಲಾಯಂಸಿಂಗ್ ಯಾದವ್. ಬೆಂಬಲಕ್ಕಾಗಿ ಯಾವ ರಾಷ್ಟ್ರೀಯ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಬಗ್ಗೆ ಇವರಿಬ್ಬರಿಗೂ ಹೆಚ್ಚು ಆಯ್ಕೆಗಳಿಲ್ಲ. ನಿತೀಶ್‌ಗೆ ಬಿಜೆಪಿ ಮತ್ತು ಮುಲಾಯಂ ಸಿಂಗ್‌ಗೆ ಕಾಂಗ್ರೆಸ್ ಅನಿವಾರ್ಯ. ಆದರೆ ಕಾಂಗ್ರೆಸ್ ಇಲ್ಲವೇ ಬಿಜೆಪಿ ಬೆಂಬಲಿಸಿದ್ದ ತೃತೀಯರಂಗದ ಸರ್ಕಾರಗಳ ರಚನೆಯ ಈ ವರೆಗಿನ ಇತಿಹಾಸವನ್ನು ನೋಡಿದರೆ ಅಂತಹ ಸರ್ಕಾರ ಬಹಳ ದಿನ ಬಾಳಬಹುದೆಂದು ಅನಿಸುವುದಿಲ್ಲ. 1989ರಲ್ಲಿ ವಿ.ಪಿ.ಸಿಂಗ್ ನೇತೃತ್ವದ ರಾಷ್ಟ್ರೀಯ ರಂಗ ಸರ್ಕಾರವನ್ನು ಬಿಜೆಪಿ ಉರುಳಿಸಿದ್ದರೆ, 1996ರಲ್ಲಿ ಮೊದಲು ಎಚ್.ಡಿ.ದೇವೇಗೌಡ ಮತ್ತು ನಂತರ ಐ.ಕೆ.ಗುಜ್ರಾಲ್ ನೇತೃತ್ವದ ಸಂಯುಕ್ತರಂಗ ಸರ್ಕಾರವನ್ನು ಉರುಳಿಸಿದ್ದು ಕಾಂಗ್ರೆಸ್. ತೃತೀಯರಂಗ ಎನ್ನುವುದು ಕೊನೆಗೂ ಮರೀಚಿಕೆಯೇ...

Monday, March 5, 2012

ಮುಖ್ಯಮಂತ್ರಿಗಳಿದ್ದಾರೆ, ಅವರ ಕೈಯಲ್ಲಿ ಅಧಿಕಾರ ಎಲ್ಲಿದೆ? March 05, 2012

ಕಳೆದ ತಿಂಗಳ ಎಂಟರಂದು ನಾನು ಉತ್ತರಪ್ರದೇಶದ ಫೈಜಾಬಾದ್‌ನಲ್ಲಿದ್ದೆ. ಆ ದಿನ ನಡೆಯಲಿದ್ದ ಮೊದಲ ಸುತ್ತಿನ ಮತದಾನವನ್ನು ಅಯೋಧ್ಯೆಯಿಂದ ವರದಿ ಮಾಡಲೆಂದು ಬಂದಿದ್ದ ಪತ್ರಕರ್ತರ ದಂಡು ನಾನಿದ್ದ ಹೊಟೇಲ್‌ನಲ್ಲಿಯೇ ಬೀಡುಬಿಟ್ಟಿತ್ತು.
 
ಬೆಳಿಗ್ಗೆ ಇನ್ನೂ ಏಳು ಗಂಟೆ ಆಗಿರಲಿಲ್ಲ, ಅಷ್ಟರಲ್ಲಿ ಯಾರೋ ಬಾಗಿಲು ಬಡಿದಂತಾಯಿತೆಂದು ತೆರೆದು ನೋಡಿದರೆ ಪಕ್ಕದ ಕೋಣೆಯಲ್ಲಿದ್ದ ಟಿವಿ ಚಾನೆಲ್‌ನ ವರದಿಗಾರ ಕೈಯಲ್ಲಿ `ದೈನಿಕ್ ಜಾಗರಣ್` ಪತ್ರಿಕೆ ಮತ್ತು ಮೈಕ್ ಹಿಡಿದುಕೊಂಡು ನಿಂತಿದ್ದ. ಹಿಂದಿನ ರಾತ್ರಿಯಷ್ಟೇ ಆತನ ಪರಿಚಯವಾಗಿತ್ತು. `ಆಪ್ ಹಿಂದಿ ಮೇ ದೋ ಶಬ್ದ್ ಬೋಲ್ ಸಕ್ತೆ ಹೋ?` ಎಂದ. `ಯಾಕೆ` ಎಂದು ಕೇಳಿದೆ.
 
ಆತ ನನ್ನ ಮುಖಕ್ಕೆ ಪತ್ರಿಕೆಯ ಮುಖಪುಟ ಹಿಡಿದ. ಅದರಲ್ಲಿ `ಬಿಜೆಪಿ ಮಂತ್ರಿಯೋಂ ಸದನ್ ಮೇ ಪೊರ್ನ್ ವಿಡಿಯೋ ದೇಖಾ` (ಬಿಜೆಪಿ ಮಂತ್ರಿಗಳು ಸದನದಲ್ಲಿ ಪೊರ್ನೋ ವಿಡಿಯೋ ನೋಡಿದರು) ಎಂಬ ಸುದ್ದಿ ಎರಡನೇ ಲೀಡ್ ಆಗಿ ಪ್ರಕಟವಾಗಿತ್ತು. ಆತನಿಗೆ ಅರ್ಜೆಂಟಾಗಿ ಒಂದು ಬೈಟ್ ಬೇಕಿತ್ತು. `ಸಾರಿ, ನನ್ನ ಹಿಂದಿ ಅಷ್ಟೊಂದು ಚೆನ್ನಾಗಿಲ್ಲ` (ಅಷ್ಟೊಂದು ಕೆಟ್ಟದೂ ಆಗಿಲ್ಲ) ಎಂದು ಹೇಳಿ ಬಾಗಿಲು ಮುಚ್ಚಿದೆ.

ಅದರ ನಂತರದ ದಿನಗಳಲ್ಲಿ ಯಾರಿಗೆ ನನ್ನನ್ನು ಪರಿಚಯಿಸಿಕೊಂಡರೂ ಅವರು ಮೊದಲು ಕೇಳುತ್ತಿದ್ದದು `ಶಾಸಕರ ಅಶ್ಲೀಲ ವಿಡಿಯೋ ವೀಕ್ಷಣೆ ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದ ಪ್ರಶ್ನೆಗಳನ್ನು. ಉತ್ತರಪ್ರದೇಶದ ಬಹಳ ಮಂದಿ ಪತ್ರಕರ್ತರು ಯಡಿಯೂರಪ್ಪನವರನ್ನು `ವೊ ತೋ ಕರ್ನಾಟಕ್ ಕಾ ಕಲ್ಯಾಣ್‌ಸಿಂಗ್` ಎನ್ನುತ್ತಿದ್ದರು. ಇಬ್ಬರ ರಾಜಕೀಯ ಮತ್ತು ಖಾಸಗಿ ಜೀವನಗಳಿಗೆ ಬಹಳಷ್ಟು ಹೋಲಿಕೆಯೂ ಇದೆ. ಬಿಜೆಪಿಯ ಒಂದು ಕಾಲದ ಕಣ್ಮಣಿ ಕಲ್ಯಾಣ್‌ಸಿಂಗ್ ಕುಸುಮಾ ರಾಯ್ ಎಂಬ ಹೆಣ್ಣಿನ ಸ್ನೇಹಕ್ಕೆ ಬಿದ್ದು ರಾಜಕೀಯ ಜೀವನವನ್ನೇ ಕಳೆದುಕೊಂಡು ವನವಾಸ ಅನುಭವಿಸುತ್ತಿದ್ದಾರೆ. 

ಅವರೆಲ್ಲರ ಆಸಕ್ತಿಗೆ ಮುಖ್ಯ ಕಾರಣ ಉತ್ತರ ಭಾರತದ ಮಾಧ್ಯಮಗಳಲ್ಲಿ ಆ ಪ್ರಕರಣಕ್ಕೆ ನೀಡಿದ್ದ ವ್ಯಾಪಕ ಪ್ರಚಾರ. ಸ್ಥಳೀಯ ಕೇಬಲ್ ಚಾನೆಲ್‌ಗಳು ಯಾವುದೋ ಬ್ಲೂಫಿಲಂಗಳ ಕ್ಲಿಪ್ಪಿಂಗ್ಸ್‌ಗಳನ್ನೆಲ್ಲ ಕರ್ನಾಟಕದ ಬಿಜೆಪಿ ಶಾಸಕರು ನೋಡಿದ್ದೆಂದು ಹೇಳಿ ತೋರಿಸಿ ಪ್ರಸಾರ ಮಾಡುತ್ತಿದ್ದವು. 

 ಹೊರರಾಜ್ಯಗಳಲ್ಲಿ ಈ ರೀತಿ ಕರ್ನಾಟಕದ ಮಾನ ಎಂದೂ ಹರಾಜಾಗಿರಲಿಲ್ಲ. `ಬಿಮಾರು` ರಾಜ್ಯಗಳೆಂಬ ಕುಖ್ಯಾತಿ ಪಡೆದಿದ್ದ ಬಿಹಾರ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಉತ್ತರಪ್ರದೇಶಗಳಲ್ಲಿಯಾದರೂ ಕರ್ನಾಟಕದವರೆಂದು ಹೇಳಿಕೊಂಡರೆ ಒಂದಿಷ್ಟು ಮರ್ಯಾದೆ -ಗೌರವ ಇತ್ತು. ಈಗ ಆ ರಾಜ್ಯದ ಜನರೂ ನಮ್ಮನ್ನೂ ಗೇಲಿ ಮಾಡುತ್ತಿರುವವರಂತೆ ನೋಡುತ್ತಿದ್ದಾರೆ. ರೋಗಗ್ರಸ್ತವಾಗಿದ್ದ ಆ ನಾಲ್ಕೂ ರಾಜ್ಯಗಳಲ್ಲಿಯೂ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ.
 
ಕರ್ನಾಟಕ ಮತ್ತೆ ಶಿಲಾಯುಗದ ಕಡೆ ಹೋಗುತ್ತಿದೆ. ಬಹುಶಃ ನಿನ್ನೆಯೂ ಪತ್ರಕರ್ತರಿಗೆ ಕಲ್ಲೆತ್ತಿಕೊಂಡು ಹೊಡೆಯಲು ನಿಂತ ವಕೀಲರು ಮತ್ತು ಪಕ್ಕದಲ್ಲಿ ಕೈಕಟ್ಟಿ ನಿಂತ ಪೊಲೀಸರ ಚಿತ್ರಗಳು ಅಲ್ಲಿನ  ಪತ್ರಿಕೆಗಳ ಮುಖಪುಟಗಳಲ್ಲಿ ಪ್ರಕಟವಾಗಿರಬಹುದು. ಇದು `ಶಿಲಾ`ಯುಗವಲ್ಲದೆ ಮತ್ತೇನು?

ಚುನಾಯಿತ ಸರ್ಕಾರವೊಂದು ಕೊನೆಯ ದಿನಗಳಲ್ಲಿ ಇಂತಹ  ಪರಿಸ್ಥಿತಿಯನ್ನು ಎದುರಿಸುತ್ತದೆ. ಆಡಳಿತದ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವುದು, ಮನೆಗೆ ಹೋಗಲಿರುವ ಸರ್ಕಾರ ಎಂದು ಅಧಿಕಾರಿಗಳು ಕೂಡಾ ಆಡಳಿತಾರೂಢರ ಮಾತಿಗೆ ಬೆಲೆ ಕೊಡದಿರುವುದು, ಅಸಹಾಯಕ ಜನ ಬೀದಿಗಿಳಿಯುವುದು, ಕಾನೂನನ್ನು ಕೈಗೆತ್ತಿಕೊಳ್ಳುವುದು, ಸರ್ಕಾರದ ವಿರುದ್ಧ ಮಾತ್ರವಲ್ಲ, ಪರಸ್ಪರ ಬಡಿದಾಡಿಕೊಳ್ಳುವುದು... ಇವೆಲ್ಲ ಸಾಮಾನ್ಯ. ಆದರೆ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಇಂತಹ ಪರಿಸ್ಥಿತಿ ಇತ್ತು. 

ಬಿ.ಎಸ್.ಯಡಿಯೂರಪ್ಪನವರು ವಿಧಾನಸೌಧದ ಒಳಗೆ ಹೋಗಿ ಕೂತದ್ದೇ ಕಡಿಮೆ. ಕೂತಾಗಲೂ ಅವರ ಕೈಯಲ್ಲಿ ಅಧಿಕಾರ ಮಾತ್ರ ಇರಲೇ ಇಲ್ಲ. ಅವರ ಆಡಳಿತದ ಬಗ್ಗೆ ನಾನು ಬರೆದ ಮೊದಲ ಅಂಕಣ ಇದೇ ವಿಷಯಕ್ಕೆ ಸಂಬಂಧಿಸಿದ್ದಾಗಿತ್ತು (`ಮುಖ್ಯಮಂತ್ರಿಗಳೇ, ಅಧಿಕಾರ ನಿಮ್ಮ ಕೈಯಲ್ಲಿಯೇ ಇರಲಿ`- ದೆಹಲಿನೋಟ. ಅಕ್ಟೋಬರ್ 6, 2008). ಪರಿಸ್ಥಿತಿ ಹಾಗೆಯೇ ಮುಂದುವರಿದಿತ್ತು, ಈಗಲೂ ಬದಲಾಗಿಲ್ಲ.

ಎರಡು ತಿಂಗಳುಗಳ ಹಿಂದೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಊರಾಗಿರುವ ಸುಳ್ಯದಲ್ಲಿಯೇ ಒಂದು ಘಟನೆ ನಡೆದಿತ್ತು. ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಜೈಲಿನಿಂದ ಬಿಡುಗಡೆಯಾಗಿದ್ದ ನಾಲ್ಕು ಮಂದಿ ಕಾರಿನಲ್ಲಿ ಊರಿಗೆ ಹೋಗುತ್ತಿದ್ದಾಗ ಸುಳ್ಯ ಬಳಿ ಅವರನ್ನು ತಡೆದು ನಿಲ್ಲಿಸಿದ ಹಿಂದು ಸಂಘಟನೆಯ ಸದಸ್ಯರು ಬಲಾತ್ಕಾರವಾಗಿ ಕರೆದುಕೊಂಡು ಹೋಗಿ ಪೊಲೀಸರಿಗೆ ಒಪ್ಪಿಸಿದ್ದರು. 

ಕಾರಿನಲ್ಲಿ ಜತೆಯಲ್ಲಿ ಹೋಗುವುದನ್ನು ಅಪರಾಧ ಎಂದು ಸಾಬೀತುಪಡಿಸುವುದು ಹೇಗೆ ಎನ್ನುವುದು ಅರ್ಥವಾಗದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೆ ಅವರನ್ನು ಬಿಟ್ಟುಬಿಟ್ಟಿದ್ದರು. ಇದರಿಂದ ರೊಚ್ಚಿಗೆದ್ದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲೆಸೆದಿದ್ದರು. ಕಲ್ಲಿನೇಟಿನಿಂದ ಮಹಿಳಾ ಕಾನ್‌ಸ್ಟೇಬಲ್ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದರು. ತಕ್ಷಣ ಪೊಲೀಸರು ದುಷ್ಕೃತ್ಯದಲ್ಲಿ ತೊಡಗಿದ್ದವರನ್ನು ಬಂಧಿಸಿದರು. ಅವರಲ್ಲಿ ಕೆಲವರು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳೂ ಇದ್ದರು. 

ಮರುದಿನ ಪೊಲೀಸರ ವಿರುದ್ದ ಭಾರಿ ಪ್ರತಿಭಟನೆ ನಡೆಯಿತು. `ಊರಿನ ಮಗ`ನಾದ ಮುಖ್ಯಮಂತ್ರಿಯವರ ಮೇಲೆ ಒತ್ತಡ ಹೇರಲಾಯಿತು. ಅದರ ಮರುದಿನ ಆ ಠಾಣೆಯ ಒಬ್ಬ ಸರ್ಕಲ್ ಇನ್‌ಸ್ಪೆಕ್ಟರ್, ಇಬ್ಬರು ಸಬ್‌ಇನ್‌ಸ್ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಯಿತು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವರ್ಗಾವಣೆಯೂ ನಡೆಯಿತು. ತಾವು ಮಾಡಿರುವ ತಪ್ಪೇನು ಎನ್ನುವುದು ಪೊಲೀಸರಿಗೆ ಇನ್ನೂ ಗೊತ್ತಾಗಿಲ್ಲ.

ಆದುದರಿಂದ ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಟಿವಿ ಚಾನೆಲ್‌ಗಳ ವರದಿಗಾರರು ಮತ್ತು ಕ್ಯಾಮೆರಾಮೆನ್‌ಗಳ ಮೇಲೆ ವಕೀಲರು ನಡೆಸುವಷ್ಟರ ಮಟ್ಟಿಗೆ ತೋರಿದ ದಾರ್ಷ್ಟ್ಯ ಮತ್ತು  ಮೂಕಪ್ರೇಕ್ಷಕರಂತೆ ನಿಂತಿದ್ದ ಪೊಲೀಸರ ವರ್ತನೆ  ಹೊಸತೇನಲ್ಲ. ಈ ಪ್ರಕರಣವನ್ನಷ್ಟೆ ಪ್ರತ್ಯೇಕವಾಗಿಟ್ಟು ನೋಡಿದರೆ ಇದನ್ನು ಅರ್ಥಮಾಡಿಕೊಳ್ಳಲು ಸಾಧ್ಯವೂ ಇಲ್ಲ. 

ಇದೊಂದು ಸರಣಿ. ಇದನ್ನು ಬಿಜೆಪಿ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೇ ಹಾವೇರಿಯಲ್ಲಿ ರೈತರ ಮೇಲೆ ನಡೆದ ಗೋಲಿಬಾರ್ ಘಟನೆಯಿಂದ ಪ್ರಾರಂಭಿಸಿ ಅದರ ನಂತರ ನಡೆದ ಚರ್ಚ್‌ಗಳ ಮೇಲೆ ದಾಳಿ, ಮಂಗಳೂರಿನಲ್ಲಿ ಪಬ್‌ಗಳಿಗೆ ನುಗ್ಗಿ ಹುಡುಗಿಯರ ಮೇಲೆ ನಡೆಸಲಾದ ದೌರ್ಜನ್ಯ, ಸಚಿವರೊಬ್ಬರ ವಿರುದ್ದ ನರ್ಸ್ ನೀಡಿರುವ ದೂರು, ಶಾಸಕರೊಬ್ಬರ ಪತ್ನಿಯ ಆತ್ಮಹತ್ಯೆ, ಬೆಂಗಳೂರಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ, ವಿಧಾನಸಭೆಯಲ್ಲಿಯೇ ಶಾಸಕರು ಅಶ್ಲೀಲ ವಿಡಿಯೋ ನೋಡಿದ ಪ್ರಸಂಗದ ವರೆಗಿನ ಎಲ್ಲ ಘಟನೆಗಳೊಂದಿಗೆ ಸೇರಿಸಿ ನೋಡಬೇಕಾಗುತ್ತದೆ.

 ಇವೆಲ್ಲವುಗಳಲ್ಲಿನ ಒಂದು ಸಾಮಾನ್ಯ ಅಂಶ ಏನೆಂದರೆ ಯಾವ ಪ್ರಕರಣಗಳಲ್ಲಿಯೂ ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗದಿರುವುದು ಮತ್ತು ಎಷ್ಟೋ ಸಂದರ್ಭಗಳಲ್ಲಿ ನಿರಪರಾಧಿಗಳಿಗೆ ಶಿಕ್ಷೆಯಾಗಿರುವುದು. ಚುನಾಯಿತ ಸರ್ಕಾರವೊಂದು ಸಂವಿಧಾನದತ್ತ ಅಧಿಕಾರವನ್ನು ತನ್ನಲ್ಲಿ ಇಟ್ಟುಕೊಳ್ಳದೆ, ಪ್ರಜೆಗಳಿಗಾಗಲಿ, ಸರ್ಕಾರಕ್ಕಾಗಲಿ ಉತ್ತರದಾಯಿ ಅಲ್ಲದ ಸಂವಿಧಾನೇತರ ಶಕ್ತಿಗಳ ಕೈಗೆ ಅದನ್ನು ಕೊಟ್ಟು ಬಿಟ್ಟರೆ ಇಂತಹ ಅನಾಹುತಗಳಲ್ಲದೆ ಬೇರೇನೂ ನಡೆಯಲು ಸಾಧ್ಯ? 

ಇದರಿಂದಾಗಿಯೇ ಯಡಿಯೂರಪ್ಪನವರು ಹಾದಿ ತಪ್ಪಿದ್ದು. ಮುಖ್ಯಮಂತ್ರಿಯಾಗಿದ್ದಾಗ ಅವರು ಪಕ್ಷದ ಹೈಕಮಾಂಡ್‌ಗಿಂತಲೂ ಹೆಚ್ಚು ನಿಷ್ಠರಾಗಿದ್ದು ಉಳಿದ ಮೂರು ಹೈಕಮಾಂಡ್‌ಗಳಿಗೆ. ಮೊದಲನೆಯದು ಸಂಘ ಪರಿವಾರ, ಎರಡನೆಯದು ವೀರಶೈವ ಮಠಗಳು ಮತ್ತು ಮೂರನೆಯದು ಬಳ್ಳಾರಿಯ ರೆಡ್ಡಿ ಸೋದರರು. 

ಯಡಿಯೂರಪ್ಪನವರು ರಾಜ್ಯದ ಖಜಾನೆಯ ಕೀಲಿಕೈಯನ್ನಷ್ಟೇ ತಾವಿಟ್ಟುಕೊಂಡು ಆಡಳಿತದ ಕೀಲಿಕೈಯನ್ನು ಮೊದಲಿನ ಮೂರು ಹೈಕಮಾಂಡ್‌ಗಳಿಗೆ ಕೊಟ್ಟು ಬಿಟ್ಟಿದ್ದರು. 

ತಾವು, ತಮ್ಮ ಕುಟುಂಬದ ಸದಸ್ಯರು ಹಾಗೂ ಕೆಲವು ಆಪ್ತ ಸಚಿವರು ಮಧ್ಯೆ ಪ್ರವೇಶಿಸಿದ ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದಂತೆ ಅಧಿಕಾರಿಗಳ ನೇಮಕ, ವರ್ಗಾವಣೆ, ಬಡ್ತಿ ಎಲ್ಲವೂ ಈ ಮೂರು ಹೈಕಮಾಂಡ್‌ಗಳ ಆದೇಶದಂತೆಯೇ ನಡೆಯುತ್ತಿತ್ತು. `ಆಪರೇಷನ್ ಕಮಲ`ವೂ ಸೇರಿದಂತೆ ಎಲ್ಲ ಬಗೆಯ ಅನೈತಿಕ ರಾಜಕಾರಣಕ್ಕೆ ಬೇಕಾದ ದುಡ್ಡನ್ನು ಗಣಿ ಲೂಟಿಕೋರರು ನೀಡಿದರೆ, ಜಾತಿಯ ಬೆಂಬಲವನ್ನು ವೀರಶೈವ ಮಠಗಳು ಧಾರೆ ಎರೆದವು.

ಸಂಘ ಪರಿವಾರದ ನಾಯಕರು ತಮ್ಮ ರಹಸ್ಯ ಕಾರ್ಯಸೂಚಿಯ ಅನುಷ್ಠಾನಕ್ಕೆ ಸರ್ಕಾರ ನೀಡುತ್ತಿರುವ ಬೆಂಬಲಕ್ಕೆ ಪ್ರತಿಯಾಗಿ ರಾಜಾರೋಷವಾಗಿ ನಡೆಯುತ್ತಿರುವ ಆರ್ಥಿಕ ಮತ್ತು ನೈತಿಕ ಭ್ರಷ್ಟಾಚಾರವನ್ನು ನೋಡಿಯೂ ನೋಡದಂತೆ ಕಣ್ಣುಮುಚ್ಚಿಕೊಂಡು ಕೂತುಬಿಟ್ಟರು. ಎಷ್ಟೋ ಸಂದರ್ಭಗಳಲ್ಲಿ ಅದರಲ್ಲಿ ಅವರೂ ಪಾಲುದಾರರಾಗಿ ಹೋದರು. ವಿಧಾನಸೌಧದಲ್ಲಿ ಆಡಳಿತ ಎಲ್ಲಿತ್ತು? ಸದ್ಯಕ್ಕೆ ಒಂದಷ್ಟು ವೀರಶೈವ ಮಠಗಳನ್ನು ಹೊರತುಪಡಿಸಿದರೆ ಉಳಿದೆಲ್ಲ `ಹೈಕಮಾಂಡ್`ಗಳು ಯಡಿಯೂರಪ್ಪನವರನ್ನು ಕೈ ಬಿಟ್ಟಿದ್ದರೂ ಅವರು ಪಾಠ ಕಲಿತ ಹಾಗಿಲ್ಲ.

ಈಗ ಡಿ.ವಿ.ಸದಾನಂದ ಗೌಡರ ಸರದಿ. ಜನಾರ್ದನ ರೆಡ್ಡಿ ಜೈಲು ಸೇರಿದ್ದಾರೆ, ಶ್ರಿರಾಮುಲು ಪಕ್ಷ ಬಿಟ್ಟಿದ್ದಾರೆ. ಆದುದರಿಂದ ಆ ಹೈಕಮಾಂಡ್ ಈಗ ಇಲ್ಲ. ವೀರಶೈವ ಮಠಗಳು ಯಡಿಯೂರಪ್ಪನವರ ಬೆಂಬಲಕ್ಕೆ ನಿಂತಿರುವ ಕಾರಣ ಆ ಕಡೆಯ ನಿಯಂತ್ರಣವೂ ಇಲ್ಲ. ಹೀಗಿದ್ದರೂ ಅವರದ್ದು ಇನ್ನೂ ದಯನೀಯ ಪರಿಸ್ಥಿತಿ. 

`ನಿಮ್ಮನ್ನು ನಾನೇ ಮುಖ್ಯಮಂತ್ರಿ ಮಾಡಿದ್ದು` ಎಂದು ಯಡಿಯೂರಪ್ಪನವರೇನೋ ಆಗಾಗ ಗುಡುಗುತ್ತಾರೆ. ಆದರೆ ಮಾಡಿದ್ದು ಯಾರು ಎನ್ನುವುದು ಅವರಿಗೂ ಗೊತ್ತು, ಸದಾನಂದ ಗೌಡರಿಗೂ ಗೊತ್ತು. ಇವರೆಲ್ಲರಿಗಿಂತಲೂ ಚೆನ್ನಾಗಿ ಕರಾವಳಿ, ಶಿವಮೊಗ್ಗ ಮತ್ತು ಬೆಂಗಳೂರಿನ ರಾಜ್ಯದ ಆರ್‌ಎಸ್‌ಎಸ್ ಮುಖಂಡರಿಗೆ ಗೊತ್ತು.
 
ಸಂಘ ಪರಿವಾರದ ಬೆಂಬಲದಿಂದಲೇ ಮುಖ್ಯಮಂತ್ರಿಯಾಗಿರುವ ಕಾರಣ ಆ `ಹೈಕಮಾಂಡ್`ಗೆ ಗೌಡರು ಸಂಪೂರ್ಣವಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಇದರಿಂದಾಗಿ ತಮ್ಮ ಹುಟ್ಟೂರಿನಲ್ಲಿಯೇ ಒಬ್ಬ ನಿರಪರಾಧಿ ಪೊಲೀಸ್ ಪೇದೆಗೆ ರಕ್ಷಣೆ ಕೊಡುವ ಸ್ಥಿತಿಯಲ್ಲಿಯೂ ಅವರಿಲ್ಲ. ಇದು ಒಂದು ಇಲಾಖೆಯ ಕತೆಯಲ್ಲ, ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಈ ಸ್ಥಿತಿ ಇದೆ. ಪ್ರಾಮಾಣಿಕತೆ ಮತ್ತು ವೃತ್ತಿನಿಷ್ಠೆಯಿಂದ ಕೆಲಸ ಮಾಡಬೇಕೆಂದು ಬಯಸುವವರ ನೈತಿಕಸ್ಥೈರ್ಯ ಕುಸಿದುಹೋಗುವಂತೆ ಮಾಡಲಾಗುತ್ತಿದೆ. ಭ್ರಷ್ಟರು ತಮಗೆ ಬೇಕಾದವರ `ಪ್ರಭಾವಳಿ`ಯ ರಕ್ಷಣೆಯಲ್ಲಿ ಪ್ರಜಾಪೀಡನೆ ನಡೆಸುತ್ತಾ ನಿಶ್ಚಿಂತೆಯಾಗಿದ್ದಾರೆ.

 ಆರೋಪಿ ಜನಾರ್ದನ ರೆಡ್ಡಿಯವರನ್ನು ನ್ಯಾಯಾಲಯಕ್ಕೆ ಕರೆತಂದ ದಿನ ಬೆಳಿಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಬ್ಬರು ಪತ್ರಕರ್ತರ ಬಳಿ ಬಂದು `ಇಂದು ನಿಮ್ಮ ಮೇಲೆ ದಾಳಿ ನಡೆಯಬಹುದು, ಎಚ್ಚರಿಕೆಯಿಂದ ಇರಿ` ಎಂದು ಹೇಳಿ ಹೋಗಿದ್ದರಂತೆ. ಅಂದರೆ ಪೂರ್ವನಿಯೋಜಿತವಾದ ಈ ದಾಳಿಯ ಮುನ್ಸೂಚನೆ ಪೊಲೀಸರಿಗೆ ಇತ್ತು ಎಂದಾಯಿತು. ಹಾಗಿದ್ದರೆ ಗೃಹಸಚಿವರಾದ ಆರ್.ಅಶೋಕ್ ಅವರಿಗೂ ಮಾಹಿತಿ ಇತ್ತೆಂದು ಆಯಿತಲ್ಲ? `ಇಲ್ಲ` ಎಂದು ಅವರು ಹೇಳಿದರೆ ಅವರ ದಕ್ಷತೆಯನ್ನು ಪ್ರಶ್ನಿಸಬೇಕಾಗುತ್ತದೆ. ಮಾಹಿತಿ ಇದ್ದೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಅವರು ತಿಳಿಸಿಲ್ಲ ಎಂದಾದರೆ ಅವರಿಗೆ ಬೇರೇನೋ ದುರುದ್ದೇಶ ಇದ್ದಿರಬಹುದು ಎಂದಾಗುತ್ತದೆ. 

ಇಡೀ ಅಪರಾಧದ ಘಟನಾವಳಿಗಳನ್ನು ಚಿತ್ರೀಕರಿಸಿದ ವಿಡಿಯೋ ಕ್ಲಿಪ್ಪಿಂಗ್ಸ್‌ಗಳು ಮತ್ತು ಚಿತ್ರಗಳು ಎದುರಿಗಿದ್ದರೂ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಹೆಚ್ಚು ಕಡಿಮೆ 30 ಗಂಟೆ ಬೇಕಾಗುವಂತಹ ವ್ಯವಸ್ಥೆಯಲ್ಲಿ ಜನರೆಷ್ಟು ಸುರಕ್ಷಿತರು? ಜನರಿಗೆ ಕನಿಷ್ಠ ಭದ್ರತೆಯ ಭಾವನೆಯನ್ನು ನೀಡಲಾಗದಿದ್ದರೆ ಸರ್ಕಾರವಾದರೂ ಯಾಕಿರಬೇಕು? ಮುಖ್ಯಮಂತ್ರಿಗಳು, ಸಚಿವ ಸಂಪುಟ ಯಾಕೆ ಬೇಕು?

Monday, February 6, 2012

ಚಿದಂಬರಂ ಕಾಂಗ್ರೆಸ್ ಪಕ್ಷದ ಮಿತ್ರನೋ, ಶತ್ರುವೋ? February 06, 2012

ಪಳನಿಯಪ್ಪ ಚಿದಂಬರಂ ಸ್ವಯಂಘೋಷಿತ ನಾಸ್ತಿಕ. ಅದೃಷ್ಟ-ದುರದೃಷ್ಟದಲ್ಲಿ ತಮಗೆ ನಂಬಿಕೆ ಇದೆ ಎಂದು ಅವರು ಹೇಳಲಾರರು. ಆದರೆ, ಅವರ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸಿಬಿಐ ಕೋರ್ಟ್ ಶನಿವಾರ ವಜಾಗೊಳಿಸಿದ ನಂತರ  `ಕಾಣದ ಕೈ`ಗಳನ್ನೆಲ್ಲ ಅವರು ನಂಬುವಂತೆ ಮಾಡಲೂಬಹುದು.
 
2ಜಿ ತರಂಗಾಂತರ ಹಂಚಿಕೆ ಹಗರಣಗಳ ತನಿಖೆಯನ್ನು ಗಮನಿಸುತ್ತ ಬಂದವರ‌್ಯಾರೂ ಸಿಬಿಐ ಕೋರ್ಟ್‌ನ ಈ ಆದೇಶವನ್ನು ನಿರೀಕ್ಷಿಸಲಾರರು. ಪ್ರಧಾನಿ ಮನಮೋಹನ್‌ಸಿಂಗ್ ಮತ್ತು ಸಚಿವ ಚಿದಂಬರಂ ಮಾತ್ರ ಇಂತಹದ್ದೊಂದು ಆದೇಶವನ್ನು ನಿರೀಕ್ಷಿಸುತ್ತಿದ್ದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದರು.
 
ಅವರ ನಿರೀಕ್ಷೆಯಂತೆಯೇ ಆದೇಶ ಬಂದಿದೆ. ಸದ್ಯಕ್ಕೆ ಪ್ರಧಾನಿಯೂ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ, ಆಡಳಿತ ಪಕ್ಷದ ಮೇಲೆ ಎರಗುತ್ತಿದ್ದ ವಿರೋಧಪಕ್ಷಗಳ ಕೈಯ್ಯಲ್ಲಿದ್ದ ಕತ್ತಿಯೂ ಹರಿತ ಕಳೆದುಕೊಂಡಿದೆ. ಮಾಜಿ ಸಚಿವ ಎ.ರಾಜಾ ಇನ್ನಷ್ಟು ಕಾಲ ಜತೆಗಾರರಿಲ್ಲದೆಯೇ ಜೈಲಿನಲ್ಲಿ ದಿನ ಕಳೆಯಬೇಕಾಗಬಹುದು. ಚಿದಂಬರಂ ಅದೃಷ್ಟದ ಸವಾರಿ ಮುಂದುವರಿದಿದೆ.
 
ಚಿದಂಬರಂ ಅವರನ್ನು ಮತ್ತೆ ಮತ್ತೆ ಅದೃಷ್ಟಶಾಲಿ ಎಂದು ಹೇಳುವುದಕ್ಕೆ ಕಾರಣ ಇದೆ. `ಕಷ್ಟ ಕಾಲದಲ್ಲಿ ಜತೆಯಲ್ಲಿದ್ದವರನ್ನು ಮಿತ್ರರು ಮತ್ತು ಜತೆಯಲ್ಲಿ ಇಲ್ಲದವರನ್ನು ಶತ್ರುಗಳು` ಎನ್ನುವುದಾದರೆ ಕೇಂದ್ರ ಗೃಹಸಚಿವ ಪಳನಿಯಪ್ಪ ಚಿದಂಬರಂ ಕಾಂಗ್ರೆಸ್ ಪಕ್ಷದ ದೊಡ್ಡ ಶತ್ರು. ಆದರೆ ಕಾಂಗ್ರೆಸ್ ನೇತೃತ್ವದ ಈಗಿನ ಸರ್ಕಾರದಲ್ಲಿ ಅವರು ಎರಡನೆಯೋ, ಮೂರನೆಯೋ ಸ್ಥಾನದಲ್ಲಿದ್ದಾರೆ. 

ಅವರಿಗೆ ಕಷ್ಟ ಎದುರಾದಾಗ ಪ್ರಧಾನಿ ಮಾತ್ರ ಅಲ್ಲ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಅವರ ನೆರವಿಗೆ ಧಾವಿಸುತ್ತಾರೆ. ಯಾರೂ ಕೇಳದಿದ್ದರೂ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೇಟ್ ನೀಡುತ್ತಾರೆ. ಇದನ್ನು ಅದೃಷ್ಟ ಎನ್ನದೆ ಬೇರೆ ಏನು ಹೇಳಲು ಸಾಧ್ಯ? 

ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿದ್ದ 1996ರಿಂದ 2004ರ ವರೆಗಿನ ಎಂಟು ವರ್ಷ, ಆ ಪಕ್ಷದ ಪಾಲಿನ ಕಡು ಕಷ್ಟದ ಕಾಲ. ಆ ಸಮಯ ಚಿದಂಬರಂ ಕಾಂಗ್ರೆಸ್ ಪಕ್ಷದಲ್ಲಿ ಇರಲೇ ಇಲ್ಲ. ಅವರು 1996ರಲ್ಲಿ ಕಾಂಗ್ರೆಸ್ ತೊರೆದು ತಮಿಳು ಮಾನಿಲ ಕಾಂಗ್ರೆಸ್ ಸೇರಿಕೊಂಡಿದ್ದರು.
 
ಕಾಂಗ್ರೆಸ್ ನಾಯಕರು ಅಧಿಕಾರ ಇಲ್ಲದೆ ವನವಾಸ ಅನುಭವಿಸುತ್ತಿದ್ದಾಗ ಚಿದಂಬರಂ ತಮಿಳು ಮಾನಿಲ ಕಾಂಗ್ರೆಸ್‌ನಿಂದ ಆಯ್ಕೆಯಾಗಿ 1996ರಿಂದ 1998ರ ವರೆಗೆ ಸಂಯುಕ್ತರಂಗ ಸರ್ಕಾರದಲ್ಲಿ ಹಣಕಾಸು ಸಚಿವರೂ ಆಗಿದ್ದರು. 

2004ರಲ್ಲಿ ಇನ್ನೇನು ಚುನಾವಣೆ ಘೋಷಣೆಯಾಗಲಿರುವಾಗ ಚಿದಂಬರಂ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾದರು. ಚುನಾವಣೆಯಲ್ಲಿ ಗೆದ್ದರು, ಹಣಕಾಸು ಸಚಿವರೂ ಆಗಿಬಿಟ್ಟರು. ಅಧಿಕಾರದಲ್ಲಿ ಇಲ್ಲದಿದ್ದಾಗ ಜತೆಯಲ್ಲಿ ಇರಲಿಲ್ಲ, ಹೇಗೋ ಕಷ್ಟಪಟ್ಟು ಪಕ್ಷ ಅಧಿಕಾರ ಗಳಿಸಿದಾಗ ಮತ್ತೆ ಕಾಣಿಸಿಕೊಂಡು ಮತ್ತೆ ಅದೇ ಪಕ್ಷವನ್ನು ಪತನದ ಅಂಚಿಗೆ ಕೊಂಡುಹೋಗಿ ನಿಲ್ಲಿಸಿದವರು ಚಿದಂಬರಂ. ಅವರ ಸಮಕಾಲೀನರಲ್ಲಿ ಯಾರೂ ಇಷ್ಟೊಂದು ದೀರ್ಘಕಾಲ ಕೇಂದ್ರದಲ್ಲಿ ಅಧಿಕಾರ ಅನುಭವಿಸಿಲ್ಲ. 


ಕಷ್ಟಕಾಲದಲ್ಲಿ ಜತೆಯಲ್ಲಿ ಇಲ್ಲದೆ, ಅಧಿಕಾರಕ್ಕೆ ಬಂದಾಗ ಒಳಗೆ ಬಂದು ಮೆರೆಯುತ್ತಿರುವ `ಪಿಸಿ` ಬಗ್ಗೆ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ-ಕಿರಿಯ ನಾಯಕರಿಗೆ ಸಿಟ್ಟಿದೆ, ಅದಕ್ಕಿಂತ ಹೆಚ್ಚಾಗಿ ಅಸೂಯೆಯೂ ಇದೆ. ನಾಳೆ ಅವರನ್ನು ಪ್ರಧಾನಿ ಮನಮೋಹನ್‌ಸಿಂಗ್ ಸಂಪುಟದಿಂದ ಕಿತ್ತುಹಾಕಿದರೆ ಅಳುವವರು ಪಕ್ಷದಲ್ಲಿ ಯಾರೂ ಇಲ್ಲ.

ಹಾರ್ವರ್ಡ್‌ನಲ್ಲಿ ಓದಿ ಬಂದಿರುವ ಚಿದಂಬರಂ ರಾಜಕೀಯ ಗಾಳಿ ಬೀಸುವ ದಿಕ್ಕನ್ನು ಗ್ರಹಿಸಬಲ್ಲ ಬುದ್ಧಿವಂತ. ಈ ಬುದ್ಧಿವಂತಿಕೆಯೋ ಇಲ್ಲ, ಅದೃಷ್ಟವೋ ಯಾವುದೋ ಒಂದು, ಚಿದಂಬರಂ ಅವರನ್ನು ರಾಜಕೀಯ ಜೀವನದುದ್ದಕ್ಕೂ ಕಾಪಾಡಿಕೊಂಡು ಬಂದಿದೆ. 

1984ರಿಂದ ಇಲ್ಲಿಯವರೆಗೆ ನಿರಂತರವಾಗಿ ಆರು ಲೋಕಸಭಾ ಚುನಾವಣೆಯಲ್ಲಿ ಅವರು ಗೆದ್ದಿದ್ದಾರೆ. ಈ ನಡುವೆ ಪಕ್ಷ ಬಿಟ್ಟಿದ್ದಾರೆ, ಬೇರೆ ಪಕ್ಷ ಸೇರಿದ್ದಾರೆ, ಸ್ವಂತ ಪಕ್ಷವನ್ನೂ ಕಟ್ಟಿದ್ದಾರೆ. ಆದರೆ ಕಳೆದ ಹದಿನೆಂಟು ವರ್ಷಗಳಲ್ಲಿ ಲೋಕಸಭೆಯಿಂದ ಹೊರಗೆ ಉಳಿದಿಲ್ಲ, ಅಧಿಕಾರದಿಂದಲೂ ಬಹಳ ದಿನ ದೂರವೂ ಉಳಿದಿಲ್ಲ.
 
ಇನ್ನೇನು ಇವರ ರಾಜಕೀಯ ಜೀವನ ಮುಗಿದೇ ಬಿಟ್ಟಿತು ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗಲೇ ಹಲವು ಬಾರಿ ಎದ್ದು ಬಂದಿದ್ದಾರೆ. ಈಗಲೂ ಹಾಗೆಯೇ ಆಗಿದೆ. ಇನ್ನೇನು ಅವರ ತಲೆ ಉರುಳಿಯೇ ಬಿಟ್ಟಿತು ಎನ್ನುವಾಗ ಸಿಬಿಐ ವಿಚಾರಣಾ ನ್ಯಾಯಾಲಯ ಅವರತ್ತ ಕರುಣೆಯ ನೋಟ ಹರಿಸಿದೆ. ಆದರೆ ಅವರೆಷ್ಟು ದಿನ ಸುರಕ್ಷಿತರಾಗಿ ಉಳಿಯಬಲ್ಲರು? ಅವರ ಮೇಲಿನ ಹಳೆಯ ಮತ್ತು ಹೊಸ ಆರೋಪಗಳನ್ನು ನೋಡಿದರೆ, ಬಹಳ ದಿನ ಚಿದಂಬರಂ ಅವರನ್ನು ಆದೃಷ್ಟವೊಂದೇ ಕಾಪಾಡಿಕೊಂಡು ಬರಲಾರದು ಎಂದೆನಿಸುತ್ತದೆ.

ಆರೋಪಗಳು, ವಿವಾದಗಳು, ರಾಜೀನಾಮೆಗಳು ಚಿದಂಬರಂ ಅವರಿಗೆ ಹೊಸತೇನಲ್ಲ. ಅವರದು ಕಳಂಕರಹಿತ ಶುಭ್ರ ವ್ಯಕ್ತಿತ್ವವೂ ಅಲ್ಲ. ಇಪ್ಪತ್ತು ವರ್ಷಗಳ ಹಿಂದೆ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ವಾಣಿಜ್ಯ ಸಚಿವರಾಗಿದ್ದ ಚಿದಂಬರಂ ಷೇರುಹಗರಣದಲ್ಲಿ ಭಾಗಿಯಾಗಿದ್ದ `ಫೇರ್‌ಗ್ರೋತ್` ಎಂಬ ಹಣಕಾಸು ಸಂಸ್ಥೆಯಲ್ಲಿ ಹಣ ಹೂಡಿದ್ದಕ್ಕಾಗಿ ರಾಜೀನಾಮೆ ನೀಡಿದ್ದರು. ದಿವಾಳಿಯಾಗಿದ್ದ ವಿದ್ಯುತ್ ಉತ್ಪಾದನಾ ಸಂಸ್ಥೆ ಎನ್ರಾನ್‌ಗೆ ಅವರು ವಕೀಲರಾಗಿದ್ದರು.
 
ವಿವಾದಾತ್ಮಕ ದಾಬೋಲ್ ಇಂಧನ ಯೋಜನೆಯ ಪರವಾಗಿಯೂ ಅವರು ಲಾಬಿ ನಡೆಸುತ್ತಿದ್ದರು ಎನ್ನುವ ಆರೋಪವೂ ಕೇಳಿಬಂದಿತ್ತು. ಯುಪಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದಾಗಲೇ ಚಿದಂಬರಂ ಗಣಿಗಾರಿಕೆಯಲ್ಲಿ ತೊಡಗಿರುವ ಬ್ರಿಟನ್‌ನ ವೇದಾಂತ ರಿಸೋರ್ಸ್ ಕಂಪೆನಿಗೆ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ತನ್ನ ಉದ್ಧಟತನದ ಉತ್ತರಗಳಿಂದಾಗಿ ಪತ್ರಕರ್ತರನ್ನು ಆಗಾಗ ಕೆರಳಿಸುತ್ತಿರುವ ಚಿದಂಬರಂ ಮೇಲೆ ಹಿಂದಿ ದಿನಪತ್ರಿಕೆಯ ಪತ್ರಕರ್ತನೊಬ್ಬ ಮೂರು ವರ್ಷಗಳ ಹಿಂದೆ ಬೂಟು ಎಸೆದುಬಿಟ್ಟಿದ್ದ. 

ಸಚಿವರಾಗಿದ್ದುಕೊಂಡೇ ಸರ್ಕಾರದ ಲಾಭದಾಯಕ ಹುದ್ದೆಯಲ್ಲಿದ್ದರು ಮತ್ತು ಕಕ್ಷಿದಾರರಿಗೆ ನೆರವಾಗಿದ್ದರು ಎನ್ನುವ ಆರೋಪಗಳೂ ಕೇಳಿಬಂದಿದ್ದವು. ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಗಂಗೆ ಕ್ಷೇತ್ರದಿಂದ ಗೆಲ್ಲಲು ಅಕ್ರಮ ಎಸಗಿದ್ದರು ಎನ್ನುವ ದೂರಿನ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಆದರೆ, ಪ್ರತಿ ಬಾರಿಯೂ ಅವರು ಸುಲಭದಲ್ಲಿ ಅಪಾಯದಿಂದ ಪಾರಾಗುತ್ತಾ ಬಂದಿದ್ದಾರೆ. ಇದಕ್ಕೆ ಪಕ್ಷ ಮತ್ತು ಸರ್ಕಾರದಲ್ಲಿರುವ ಹಿರಿಯರ ಜತೆಗೆ ಅವರು ಬೆಳೆಸಿಕೊಳ್ಳುವ ಸಂಬಂಧ ಕಾರಣ ಇರಬಹುದು. ಈಗಿನ ಬಿಕ್ಕಟ್ಟಿನಲ್ಲಿಯೂ ಪಾರಾಗಲು ಮನಮೋಹನ್‌ಸಿಂಗ್ ಜತೆಯಲ್ಲಿ ಅವರಿಗಿದ್ದ ಸೌಹಾರ್ದಯುತ ಸಂಬಂಧ ಕಾರಣ ಎನ್ನುವವರಿದ್ದಾರೆ.
 
ಇದಕ್ಕಿಂತಲೂ ಹೆಚ್ಚಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮೇಲೆ ಇಟ್ಟಿರುವ ವಿಶ್ವಾಸ ಕಾರಣ ಎನ್ನುವವರೂ ಇದ್ದಾರೆ. ಎರಡನೇ ಕಾರಣ ಸತ್ಯಕ್ಕೆ ಹೆಚ್ಚು ಸಮೀಪ ಇದ್ದಂತೆ ಕಾಣುತ್ತಿದೆ. ಚಿದಂಬರಂ ಸಮರ್ಥರು, ಯಾವ ಖಾತೆ ಕೊಟ್ಟರೂ ದಕ್ಷತೆಯಿಂದ ನಿರ್ವಹಿಸಬಲ್ಲರು ಎನ್ನುವ ಅಭಿಪ್ರಾಯ ಇದೆ. ಒಂದು ಕಾಲದಲ್ಲಿ ದೇಶಕ್ಕೆ `ಕನಸಿನ ಬಜೆಟ್` ಕೊಟ್ಟು ಅವರು ಜನಪ್ರಿಯರಾದವರು.. ಎಲ್ಲವೂ ನಿಜ. ಆದರೆ ಯುಪಿಎ ಎರಡನೇ ಅವಧಿಯಲ್ಲಿ ಸರ್ಕಾರಕ್ಕೆ ಅವರಿಂದಾದ ಲಾಭ-ನಷ್ಟಗಳ ಲೆಕ್ಕಹಾಕಿದರೆ ನಷ್ಟದ ಕಡೆ ತಕ್ಕಡಿ ವಾಲುತ್ತದೆ. 

2008ರಲ್ಲಿ ಮುಂಬೈನ ತಾಜ್ ಹೋಟೆಲ್ ಮೇಲೆ ಭಯೋತ್ಪಾದಕರ ದಾಳಿ ನಡೆದಾಗ ಶಿವರಾಜ್ ಪಾಟೀಲ್ ಎಂಬ ಶೋಕಿಲಾಲ ಸಚಿವರಿಂದಾಗಿ ಗೃಹಖಾತೆ ಹೆಚ್ಚುಕಡಿಮೆ ನಿಷ್ಕ್ರಿಯ ಸ್ಥಿತಿಯಲ್ಲಿತ್ತು. ಆ ಸಮಯದಲ್ಲಿ ಗೃಹಖಾತೆಯನ್ನು ವಹಿಸಿಕೊಂಡವರು ಚಿದಂಬರಂ. ಪ್ರಾರಂಭದ ದಿನಗಳ ಅವರ ಕಾರ‌್ಯನಿರ್ವಹಣೆ ವಿರೋಧಪಕ್ಷಗಳ ಶ್ಲಾಘನೆಗೂ ಪಾತ್ರವಾಗಿತ್ತು. 

ಆದರೆ ಎಚ್ಚರಿಕೆ ನೀಡುವ ಅವರ ಮಾತುಗಳಿಂದ ಭಯೋತ್ಪಾದಕರ ದುಷ್ಕೃತ್ಯಗಳು ನಿಲ್ಲಲಿಲ್ಲ. ಕಳೆದ ವರ್ಷದ ಜುಲೈನಲ್ಲಿ ಅದೇ ಮುಂಬೈನಲ್ಲಿ ಭಯೋತ್ಪಾದಕರು ಮತ್ತೆ ದಾಳಿ ನಡೆಸಿದ್ದರು. ಗೃಹಸಚಿವರಾದ ನಂತರ ಮಾವೋವಾದಿಗಳ ವಿರುದ್ಧ ಅವರು ಸಮರವನ್ನೇ ಸಾರಿದ್ದರು. ಆದರೆ, ಆ ಸಂಘಟನೆಯ ಒಂದಿಬ್ಬರು ನಾಯಕರನ್ನು ನಕಲಿ ಎನ್‌ಕೌಂಟರ್‌ಗಳ ಮೂಲಕ ಕೊಂದು ಹಾಕಿದ್ದನ್ನು ಹೊರತುಪಡಿಸಿದರೆ ಮಾವೋವಾದಿಗಳನ್ನು ನಿಯಂತ್ರಿಸಲು ಅವರಿಗೆ ಸಾಧ್ಯವಾಗಿಲ್ಲ.
 
ಜಾರ್ಖಂಡ್, ಚತ್ತೀಸ್‌ಗಢ, ಒಡಿಶಾ ಮತ್ತು ಪಶ್ಚಿಮಬಂಗಾಳಗಳಲ್ಲಿ ಮಾವೋವಾದಿಗಳ ಹಿಂಸೆಗೆ ಪೊಲೀಸ್ ಸಿಬ್ಬಂದಿ ಮತ್ತು ಅಮಾಯಕ ನಾಗರಿಕರು ಬಲಿಯಾಗುತ್ತಲೇ ಇದ್ದಾರೆ. ಹಿಂದೂ ಭಯೋತ್ಪಾದನೆಯ ವಿರುದ್ಧ ವೀರಾವೇಶದಿಂದ ಮಾತನಾಡುತ್ತಿದ್ದ ಚಿದಂಬರಂ, ಇದೇ ಕಾರಣಕ್ಕೆ ಬಿಜೆಪಿ ತನ್ನನ್ನು ಗುರಿಯಾಗಿರಿಸಿಕೊಂಡಿದೆ ಎನ್ನುವುದು ಅರಿವಾದ ನಂತರ ಮೌನಕ್ಕೆ ಜಾರಿದ್ದಾರೆ. ಅಣ್ಣಾ ಹಜಾರೆಯವರನ್ನು ಬಂಧಿಸಿ ತಿಹಾರ್ ಜೈಲಿಗೆ ಕಳುಹಿಸುವ ಮೂಲಕ ಅವರನ್ನು `ಹೀರೋ` ಮಾಡಿದ ಮೂರ್ಖ ನಿರ್ಧಾರ ಕೂಡಾ ಚಿದಂಬರಂ ಅವರದ್ದು.

ಇವೆಲ್ಲದರ ಜತೆಯಲ್ಲಿ ಹಣಕಾಸು ಸಚಿವರಾಗಿದ್ದ ದಿನಗಳಲ್ಲಿ ನಡೆದ 2ಜಿ ತರಂಗಾಂತರ ಹಗರಣ ಚಿದಂಬರಂ ಕೊರಳಿಗೆ ಸುತ್ತಿಕೊಂಡಿದೆ. ಸಿಬಿಐ ವಿಚಾರಣಾ ನ್ಯಾಯಾಲಯ ಅವರ ವಿರುದ್ಧದ ಆರೋಪಗಳ ತನಿಖೆಗೆ ಆದೇಶ ನೀಡಲು ನಿರಾಕರಿಸಿದ ನಂತರವೂ ಹಗರಣಕ್ಕೆ ಸಂಬಂಧಿಸಿದ ಒಂದಷ್ಟು ಪ್ರಶ್ನೆಗಳು ಹಾಗೆಯೇ ಉಳಿದುಬಿಟ್ಟಿವೆ. 2001ರಲ್ಲಿ ನಿಗದಿಪಡಿಸಿದ ದರದಲ್ಲಿ ಆರು ವರ್ಷಗಳ ನಂತರ 2ಜಿ ತರಂಗಾಂತರದ ಪರವಾನಿಗೆಗಳನ್ನು ವಿತರಿಸುವುದನ್ನು ಆಕ್ಷೇಪಿಸಿ ಆಗ ಹಣಕಾಸು ಖಾತೆಯ ಕಾರ್ಯದರ್ಶಿ ಡಿ.ಸುಬ್ಬಾರಾವ್ ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಡಿ.ಎಸ್.ಮಾಥುರ್ ಅವರಿಗೆ 2007ರ ನವೆಂಬರ್ 22ರಂದು ಮೊದಲ ಪತ್ರ ಬರೆದಿದ್ದರು.
 
ಇಂತಹ ಮಹತ್ವದ ನಿರ್ಧಾರ ಕೈಗೊಂಡಾಗ ಹಣಕಾಸು ಇಲಾಖೆಯ ಜತೆ ಯಾಕೆ ಸಮಾಲೋಚನೆ ನಡೆಸಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಆ ದಿನದಿಂದ 122 ಪರವಾನಿಗೆಗಳ ವಿತರಣೆಯಾದ 2008ರ ಜನವರಿ ಒಂಬತ್ತರ ವರೆಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಹತ್ತಾರು ಪತ್ರಗಳನ್ನು ದೂರಸಂಪರ್ಕ ಇಲಾಖೆಗೆ ಬರೆದಿದ್ದಾರೆ. ಇವೆಲ್ಲವೂ ಹಣಕಾಸು ಸಚಿವರಾದ ಪಿ.ಚಿದಂಬರಂ ಅವರ ಗಮನಕ್ಕೆ ಬರದಂತೆ ನಡೆದಿತ್ತು ಎಂದು ಯಾರೂ ಹೇಳಲಾರರು. ಒಂದೊಮ್ಮೆ ಹೇಳಿದರೂ ಅದನ್ನು ಯಾರೂ ನಂಬಲಾರರು.

ಸರ್ಕಾರದ ಯಾವುದೇ ಇಲಾಖೆಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ನಡೆಯುವ ವ್ಯವಹಾರದಲ್ಲಿ ಮಧ್ಯೆ ಪ್ರವೇಶಿಸುವ ಅಧಿಕಾರ ಹಣಕಾಸು ಸಚಿವರಿಗೆ ಇದೆ. 2ಜಿ ತರಂಗಾಂತರ ಹಗರಣದಲ್ಲಿ ಚಿದಂಬರಂ ಖಾತೆಯ ಅಧಿಕಾರಿಗಳೇ ರಾಜಾ ಅವರ ನಿರ್ಧಾರಕ್ಕೆ ವಿರುದ್ಧವಾಗಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪತ್ರಗಳನ್ನು ಬರೆದಿರುವುದಕ್ಕೆ ಪುರಾವೆಗಳಿವೆ (ಆ ಪತ್ರಗಳು ಮಾಹಿತಿ ಹಕ್ಕು ಕಾಯಿದೆಯಡಿ ಕೇಳಿದವರ ಮೂಲಕ ಈಗ ಬಹಿರಂಗಗೊಂಡಿವೆ). ಸ್ವತಃ ಚಿದಂಬರಂ ಅವರೇ ಹರಾಜು ಪರವಾಗಿ ಇದ್ದರು ಮತ್ತು `ಮೊದಲು ಬಂದವರಿಗೆ ಮೊದಲ ಆದ್ಯತೆ` ನೀತಿಗೆ 2007ರ ನವೆಂಬರ್‌ನಿಂದ 2008ರ ಜನವರಿ 15ರವರೆಗೆ ವಿರುದ್ಧವಾಗಿದ್ದರಂತೆ.
 
ಆ ಅವಧಿಯಲ್ಲಿ ಅವರು ಹಲವಾರು ಬಾರಿ ಎ.ರಾಜಾ ಅವರನ್ನು ಭೇಟಿ ಮಾಡಿ ಚರ್ಚೆ ಕೂಡಾ ನಡೆಸಿದ್ದರು. ಆದರೆ, ಇದ್ದಕ್ಕಿದ್ದಂತೆ ಅವರು 2008ರ ಜನವರಿ 15ರಂದು ಪ್ರಧಾನಿಗೆ `ಎ.ರಾಜಾ ಅವರ ನಿರ್ಧಾರ ಮುಗಿದ ಅಧ್ಯಾಯ` ಎಂದು ಪತ್ರ ಬರೆದು ಸುಮ್ಮನಾಗುತ್ತಾರೆ. ಈ ದಿಢೀರ್ `ಮೌನಸಮ್ಮತಿ`ಗೆ ಕಾರಣವೇನು? ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವನ್ನುಂಟು ಮಾಡುವ ಸಚಿವ ಎ.ರಾಜಾ ಅವರ ನಿರ್ಧಾರವನ್ನು ತಡೆಯಲು ಅವರು ಯಾಕೆ ಪ್ರಯತ್ನಿಸಲಿಲ್ಲ ಎನ್ನುವುದು ಈಗಲೂ ಪ್ರಶ್ನೆಯಾಗಿಯೇ ಉಳಿದಿದೆ. ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕಾಗ ಚಿದಂಬರಂ ಅವರ ಬೆನ್ನ ಹಿಂದೆ ಇರುವ ಆದೃಷ್ಟದೇವತೆಯೂ ಬೆನ್ನು ತಿರುಗಿಸಬಹುದು.