Thursday, October 18, 2012

ಊಹಾಪೋಹ ಮಹಾಪೂರದಲ್ಲಿ ಕೊಚ್ಚಿಹೋಗುವ ಮುನ್ನ... September 03, 2012


ಕಳೆದ ನಾಲ್ಕಾರು ದಿನಗಳಲ್ಲಿ ಮಾಧ್ಯಮಗಳ ಮೂಲಕ ಸೋರಿಬರುತ್ತಿರುವ ಸುದ್ದಿಗಳೆಲ್ಲವೂ ನಿಜವಾಗಿದ್ದರೆ ದೇಶದ ಭವಿಷ್ಯ ಭಯಾನಕವಾಗಿದೆ. ರಾಜ್ಯದ ಕೆಲವು ರಾಜಕಾರಣಿಗಳು ಮತ್ತು ಪತ್ರಕರ್ತರ ಹತ್ಯೆಗೆ ಸಂಚು ರೂಪಿಸಿರುವ ಆರೋಪದ ಮೇಲೆ ಹನ್ನೊಂದು ಮುಸ್ಲಿಮ್ ಯುವಕರನ್ನು ಬಂಧಿಸಿದ ನಂತರದ `ಸುದ್ದಿ ಸ್ಫೋಟ`ವನ್ನು ನಂಬಿದ ಯಾರಲ್ಲಿಯೂ ಹೊರಗೆ ಹೊರಟ ಮೇಲೆ ಸುರಕ್ಷಿತವಾಗಿ ಮನೆಗೆ ಮರಳುತ್ತೇನೆ ಎಂಬ ವಿಶ್ವಾಸ ಹುಟ್ಟಲಾರದು.

`...ರಾಜ್ಯದ ಮೆಟ್ರೊ ರೈಲ್ವೆ ನಿಲ್ದಾಣದಿಂದ ಹಿಡಿದು ಕೈಗಾ ಅಣುಸ್ಥಾವರದವರೆಗೆ, ಗಣೇಶೋತ್ಸವದಿಂದ ಹಿಡಿದು ಮೈಸೂರು ದಸರಾದ ವರೆಗೆ ಹಲವಾರು ಕಡೆ ಬಾಂಬು ಸ್ಫೋಟ ನಡೆಸುವ ಉದ್ದೇಶವನ್ನು ಈ ಶಂಕಿತ ಉಗ್ರರು ಹೊಂದಿದ್ದರು. ಎಲ್‌ಇಟಿ, ಹುಜಿ ಸೇರಿದಂತೆ ಹಲವು ಪ್ರಮುಖ ಉಗ್ರಗಾಮಿ ಸಂಘಟನೆಗಳ ಜತೆ ಇವರು ಸಂಪರ್ಕ ಹೊಂದಿದ್ದರು. ಉತ್ತರಪ್ರದೇಶ, ಮಹಾರಾಷ್ಟ್ರ, ಹೈದರಾಬಾದ್‌ಗಳಲ್ಲಿಯೂ ಇವರ ಜಾಲ ಹರಡಿದೆ, ಪಾಕಿಸ್ತಾನ ಮಾತ್ರವಲ್ಲ ಆಫ್ಘಾನಿಸ್ತಾನ ಮತ್ತು ಸೌದಿ ಅರೆಬಿಯಾ ದೇಶಗಳಿಗೂ ಇವರು ಭೇಟಿ ನೀಡಿದ್ದರು......` ಇತ್ಯಾದಿ ಊಹಾಪೋಹ ಆಧರಿತ ಸುದ್ದಿಗಳ ಮಹಾಪೂರವೇ ಹರಿದುಬರುತ್ತಿದೆ.

 ಇವುಗಳಲ್ಲಿ ಯಾವುದೂ ಪೊಲೀಸರ ಅಧಿಕೃತ ಹೇಳಿಕೆಗಳಲ್ಲ, ಸಾರ್ವಜನಿಕ ದಾಖಲೆಯಾಗಿರುವ ಪ್ರಥಮ ಮಾಹಿತಿ ವರದಿಯನ್ನೂ ಪೊಲೀಸರು ಹೊರಗೆ ಬಿಟ್ಟುಕೊಡುತ್ತಿಲ್ಲ.

ಹೀಗೆ ಹೇಳಿದ ಮಾತ್ರಕ್ಕೆ ಅವರು ಕಟ್ಟುನಿಟ್ಟಾಗಿ ತನಿಖೆಯ ರಹಸ್ಯಪಾಲನೆ ಮಾಡುತ್ತಿದ್ದಾರೆ ಎಂದು ಅರ್ಥವಲ್ಲ, ಪರಿಚಿತ ಪತ್ರಕರ್ತರಿಗೆ ಪೊಲೀಸ್ ಅಧಿಕಾರಿಗಳು ಮುಕ್ತವಾಗಿ `ತನಿಖೆಯ ವಿವರ`ಗಳನ್ನು ಸೋರಿಬಿಡುತ್ತಿದ್ದಾರೆ. ಒಬ್ಬರು ಹೇಳಿರುವುದನ್ನು ಇನ್ನೊಬ್ಬರು ನಿರಾಕರಿಸುತ್ತಿದ್ದಾರೆ. ಕೈಗಾ ಅಣುಸ್ಥಾವರ ಶಂಕಿತ ಉಗ್ರರ ಗುರಿಯಾಗಿತ್ತು ಎಂದು ಸುದ್ದಿಸಂಸ್ಥೆಯೊಂದು ಮಾಡಿರುವ ವರದಿಯನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರೇ ನಿರಾಕರಿಸುತ್ತಿದ್ದಾರೆ.

ಮೆಟ್ರೊ ನಿಲ್ದಾಣ ಸ್ಫೋಟ ಪ್ರಯತ್ನದ ಸುದ್ದಿಯನ್ನು ಕೂಡಾ ನಿರಾಕರಿಸಲಾಗಿದೆ. ಹಳೆಯ ಸುದ್ದಿಗಳನ್ನು ನಿರಾಕರಿಸಲಾಗುತ್ತಿದ್ದಂತೆಯೇ ಹೊಸ ಸುದ್ದಿಗಳು ಬೆಳಕಿಗೆ ಬರುತ್ತಿವೆ. ಪೈಪೋಟಿಯ ಯುಗದಲ್ಲಿ ಸಿಕ್ಕ ಸುದ್ದಿಯನ್ನು ದೃಢೀಕರಿಸಲು ಬೇಕಾದ ಸಮಯಾವಕಾಶ ಪತ್ರಕರ್ತರಿಗೂ ಇಲ್ಲ. ಮಾಧ್ಯಮರಂಗದ ಈ ದೌರ್ಬಲ್ಯವನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೋ ಏನೋ ಎಂದು ಅನುಮಾನ ಪಡುವ ರೀತಿಯಲ್ಲಿ `ಸುದ್ದಿಸ್ಫೋಟ` ನಡೆಯುತ್ತಿದೆ.

ಇವೆಲ್ಲವನ್ನೂ ನೋಡುತ್ತಿದ್ದಾಗ `ಕಾಶ್ಮೆರ್ ಟೈಮ್ಸ` ಪತ್ರಿಕೆಯ ದೆಹಲಿ ಬ್ಯೂರೊ ಮುಖ್ಯಸ್ಥರಾದ ಇಫ್ತಿಕರ್ ಗಿಲಾನಿ ಎಂಬ ಪತ್ರಕರ್ತ ನೆನಪಾಗುತ್ತಿದ್ದಾರೆ. ದೆಹಲಿಯಲ್ಲಿ ನಮ್ಮ ಪತ್ರಿಕೆಯ ಕಚೇರಿ ಇರುವ ಐಎನ್‌ಎಸ್ ಕಟ್ಟಡದಲ್ಲಿಯೇ ಗಿಲಾನಿ ಅವರ ಪತ್ರಿಕೆಯ ಕಚೇರಿಯೂ ಇದೆ. ಸ್ವಲ್ಪ ಕುಳ್ಳಗಿನ, ಸೌಮ್ಯ ಸ್ವಭಾವದ ಸುಮಾರು 35ರ ಆಜುಬಾಜಿನ ಈ ಗಿಲಾನಿ `ಪಾಕಿಸ್ತಾನದ ಜತೆ ಸಂಪರ್ಕ ಹೊಂದಿದ್ದ ಭಯೋತ್ಪಾದಕ`ನೆಂದು ಒಂದು ದಿನ ಇದ್ದಕ್ಕಿದ್ದಂತೆ ಟಿವಿಚಾನೆಲ್‌ಗಳು ಕಿರಿಚಾಡುತ್ತಿರುವಾಗ ಅವರನ್ನು ಮೂರು ವರ್ಷಗಳಿಂದ ಆಗಾಗ ನೋಡುತ್ತಿದ್ದ ನನಗೆ ಆಘಾತವಾಗಿತ್ತು.

ಇಫ್ತಿಕರ್ ಗಿಲಾನಿ ಅವರು ಕಾಶ್ಮೆರದ ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಅಲಿ ಶಹಾ ಗಿಲಾನಿ ಅಳಿಯನೆಂದು ಹೆಚ್ಚಿನವರಿಗೆ ಗೊತ್ತಾಗಿದ್ದು ಕೂಡಾ ಅವರ ಬಂಧನದ ನಂತರ. 2002ರ ಜುಲೈ ಒಂಬತ್ತರಂದು ದೆಹಲಿಯ ಮಾಳವೀಯ ನಗರದ ಅವರ ಮನೆ ಮೇಲೆ ದಾಳಿ ನಡೆಸಿದ ವರಮಾನ ಇಲಾಖೆ ಅಧಿಕಾರಿಗಳ ಜತೆಯಲ್ಲಿ ಬಂದ ಐಬಿ ಅಧಿಕಾರಿಗಳು ಗಿಲಾನಿ ಅವರನ್ನು ಉಟ್ಟ ಬಟ್ಟೆಯಲ್ಲಿಯೇ ಬಂಧಿಸಿ ಕರೆದೊಯ್ದಿದ್ದರು.

`ಅಧಿಕೃತ ರಹಸ್ಯ ಕಾಯಿದೆ`ಯಡಿ ಬಂಧಿಸಲಾದ ಅವರ ಮೇಲೆ ಬೇಹುಗಾರಿಕೆ, ರಾಜದ್ರೋಹದ ಆರೋಪಗಳನ್ನು ಮಾತ್ರವಲ್ಲ ಅಬ್ದುಲ್ ಗನಿ ಲೋನ್ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಆರೋಪಗಳನ್ನೂ ಹೊರಿಸಲಾಗಿತ್ತು. ಅವರನ್ನು ಬಂಧಿಸಿದ ಎರಡು ತಿಂಗಳ ನಂತರ `ಅಶ್ಲೀಲ ಚಿತ್ರಗಳ ಪ್ರದರ್ಶನ ಮತ್ತು ಮಾರಾಟ ನಡೆಸುತ್ತಿದ್ದರು` ಎಂಬ ಹೊಸ ಆರೋಪ ಮಾಡಲಾಗಿತ್ತು.

 ಈ ಎಲ್ಲ ಆರೋಪಗಳಿಗೆ ಗುಪ್ತಚರ ಇಲಾಖೆ ಆಧಾರವಾಗಿ ಬಳಸಿದ್ದು ಅವರ ಕಂಪ್ಯೂಟರ್‌ನಿಂದ ವಶಪಡಿಸಿಕೊಂಡ `ಫ್ಯಾಕ್ಟ್‌ಶೀಟ್ ಆನ್ ಇಂಡಿಯನ್ ಫೋರ್ಸಸ್ ಇನ್ ಇಂಡಿಯಾ ಹೆಲ್ಡ್ ಕಾಶ್ಮೆರ್` ಎಂಬ ಹೆಸರಿನ ಫೈಲ್‌ನಲ್ಲಿದ್ದ ಐದು ಪುಟಗಳ ದಾಖಲೆ. ಕಾಶ್ಮೆರದ ಉತ್ತರ ಕಮಾಂಡ್‌ನ ವ್ಯಾಪ್ತಿಯಲ್ಲಿರುವ ಭಾರತೀಯ ಸೇನೆ ಮತ್ತು ಅರೆಸೇನಾಪಡೆಯ ಸಾಮರ್ಥ್ಯದ ಬಗ್ಗೆ ಅದರಲ್ಲಿ ವಿವರಗಳಿದ್ದವು.

ಈ ಬಗ್ಗೆ ಸೇನಾ ಗುಪ್ತಚರ ಮಹಾನಿರ್ದೇಶಕರ (ಡಿಜಿಎಂಐ) ಅಭಿಪ್ರಾಯ ಪಡೆಯಲಾಗಿತ್ತು. ` ..ಈ ಮಾಹಿತಿ ದೇಶದ ಭದ್ರತೆಗೆ ಅಪಾಯಕಾರಿ ಹಾಗೂ ಜಮ್ಮು ಮತ್ತು ಕಾಶ್ಮೆರದಲ್ಲಿನ ಕಾರ್ಯಾಚರಣೆಯ ಮೇಲೆ ಗಂಭೀರ ಪರಿಣಾಮ ಉಂಟುಮಾಡಲಿದೆ..`ಎಂದು ಡಿಜಿಎಂಐ ಹೇಳಿತ್ತು. ಇಂಟಲಿಜೆನ್ಸ್ ಬ್ಯೂರೋ (ಐಬಿ) ಆಗಲೇ ಗಿಲಾನಿ ಅಪರಾಧಿ ಎಂದು ತೀರ್ಮಾನಿಸಿಯಾಗಿತ್ತು.

ಏಳು ತಿಂಗಳ ನಂತರ ಆರೋಪಮುಕ್ತರಾಗಿ ಹೊರಬಂದ ಗಿಲಾನಿ ತಿಹಾರ್ ಜೈಲಿನೊಳಗೆ ಪ್ರವೇಶಿಸಿದ ಮೊದಲ ದಿನದ ಅನುಭವವನ್ನು  `ಮೈ ಡೇಸ್ ಇನ್ ಪ್ರಿಸನ್` ಎಂಬ ತಮ್ಮ ಪುಸ್ತಕದಲ್ಲಿ ಹೀಗೆ ಬರೆದುಕೊಂಡಿದ್ದಾರೆ:

`.....ತಿಹಾರ್ ಜೈಲು ಪ್ರವೇಶಿಸುತ್ತಿದ್ದಂತೆಯೇ ಅಲ್ಲಿದ್ದ ಒಬ್ಬ ಅಧಿಕಾರಿ ತನ್ನನ್ನು ಹಿಂಬಾಲಿಸುವಂತೆ ನನಗೆ ಸೂಚನೆ ನೀಡಿದರು. ಅಲ್ಲಿರುವ ಮೇಜಿನ ಹಿಂದೆ ಕಿಶನ್ ಎನ್ನುವ ಅಧಿಕಾರಿ ಕೂತಿದ್ದರು,ಅವರ ಸುತ್ತ 10-12 ಮಂದಿ ನೆರೆದಿದ್ದರು. ಅವರಲ್ಲಿ ಕೆಲವರು ಜೈಲು ಸಿಬ್ಬಂದಿ, ಉಳಿದವರು ಕೈದಿಗಳು.

ನನ್ನ ಹೆಸರೇನೆಂದು ಕಿಶನ್ ಕೇಳಿದರು. ನಾನು ಉತ್ತರಿಸುವಷ್ಟರಲ್ಲಿ ಅಲ್ಲಿದ್ದ ಜೈಲು ಸಿಬ್ಬಂದಿಯೊಬ್ಬ ನನ್ನ ಕೆನ್ನೆಗೆ ಬೀಸಿ ಹೊಡೆದ. ತಕ್ಷಣ ಅಲ್ಲಿದ್ದವರೆಲ್ಲರೂ ನನ್ನ ಮೇಲೆ ಎರಗಿದರು, ಹೊಟ್ಟೆ,ಬೆನ್ನು, ತಲೆ ಸೇರಿದಂತೆ ಸಿಕ್ಕಸಿಕ್ಕಲ್ಲಿ ಹೊಡೆದದ್ದು ಮಾತ್ರವಲ್ಲ ನನ್ನ ಕೂದಲನ್ನು ಹಿಡಿದು ಜಗ್ಗಿ ತಲೆಯನ್ನು ಮೇಜಿಗೆ ಅಪ್ಪಳಿಸಿದರು. ನನ್ನ ಬಾಯಿ,ಕಿವಿ, ಮೂಗುಗಳಿಂದ ರಕ್ತ ಸುರಿಯುತ್ತಿತ್ತು.

`ಸಾಲಾ, ಗದ್ದಾರ್, ಪಾಕಿಸ್ತಾನಿ ಏಜಂಟ್, ನಿನ್ನಂತಹವರು ಬದುಕಬಾರದು, ನೇರವಾಗಿ ಗಲ್ಲಿಗೇರಿಸಬೇಕು..` ಎಂದು ಬೈಯ್ಯುತ್ತಿರುವುದು ಪ್ರಜ್ಞೆ ತಪ್ಪುವವರೆಗೆ ಕೇಳುತ್ತಲೇ ಇತ್ತು. ಪ್ರಜ್ಞೆ ಬಂದ ಮೇಲೆ ನನ್ನ ಅಂಗಿಯಿಂದ ಟಾಯ್ಲೆಟ್ ಶುಚಿ ಮಾಡುವಂತೆ ತಿಳಿಸಿ ಮೂರು ದಿನಗಳ ಕಾಲ ಅದೇ ಅಂಗಿಯನ್ನು ತೊಡುವಂತೆ ಮಾಡಿದರು......`

ಯಾವ ಉದ್ದೇಶದಿಂದ ಗಿಲಾನಿ ಅವರನ್ನು ಬಂಧಿಸಿದ್ದರೆಂಬುದು ಈಗಲೂ ನಿಗೂಢವಾಗಿಯೇ ಉಳಿದಿದೆ. ಬಂಧಿಸಿದ ಮರುಕ್ಷಣವೇ ಐಬಿ ಅಧಿಕಾರಿಗಳಿಗೆ ತಮ್ಮ ತಪ್ಪಿನ ಅರಿವಾಗಿರಬಹುದು.

ಮಾಡಿರುವ ಆರೋಪವನ್ನು ಸಮರ್ಥಿಸಿಕೊಳ್ಳುವ ಸಾಕ್ಷ್ಯಾಧಾರಗಳು ಅವರಲ್ಲಿ ಇರಲಿಲ್ಲ. ಆಗ ಗೃಹಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ಹದಿನೇಳು ಬಾರಿ ಗಿಲಾನಿ ಸಂಬಂಧಿತ ಕಡತವನ್ನು ತರಿಸಿಕೊಂಡು ಪರಿಶೀಲಿಸಿದ್ದಾರೆ. ಪ್ರತಿಬಾರಿ ಸೂಕ್ತ ಸಾಕ್ಷ್ಯಾಧಾರಗಳನ್ನು ಕೇಳಿದ್ದರು. ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುವ ಬದಲಿಗೆ ಐಬಿ ಅಧಿಕಾರಿಗಳು ಒಂದಷ್ಟು ಸುಳ್ಳುಕತೆಗಳನ್ನು ಕಟ್ಟಿ ಮಾಧ್ಯಮಗಳಲ್ಲಿ ತೇಲಿ ಬಿಡತೊಡಗಿದ್ದರು.

ಮಾಧ್ಯಮಗಳು ಕೂಡಾ `ನಂಬಲರ್ಹ ಮೂಲಗಳು` ಕೊಟ್ಟ ಮಾಹಿತಿಯನ್ನು ಪರಾಮರ್ಶಿಸಲು ಹೋಗದೆ ಪ್ರಕಟಣೆ-ಪ್ರಸಾರ ನಡೆಸಿದವು. `ಹಿಂದಿ ಟಿವಿ ಚಾನೆಲ್‌ನ ಒಬ್ಬ ವರದಿಗಾರ ತಮ್ಮ ಮನೆಯ ಮುಂಭಾಗದಲ್ಲಿ ತನ್ನ ಹೆಸರಿದ್ದ ಅಂಚೆಪೆಟ್ಟಿಗೆಯ ಮುಂದೆ ನಿಂತು `ಗಿಲಾನಿ ಪರಾರಿಯಾಗಿದ್ದಾರೆ` ಎಂದು ಹೇಳುತ್ತಿರುವಾಗ ಮನೆಯೊಳಗೆ ಐಬಿ ಅಧಿಕಾರಿಗಳು ತಮ್ಮನ್ನು ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದುದನ್ನು ಗಿಲಾನಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ದೆಹಲಿಯ ಪ್ರಸಿದ್ಧ ಇಂಗ್ಲಿಷ್ ಪತ್ರಿಕೆಯ ಪತ್ರಕರ್ತೆಯೊಬ್ಬರು `ನಾನು ಐಎಸ್‌ಐ ಏಜಂಟ್ ಎಂದು ಗಿಲಾನಿ ತಪ್ಪೊಪ್ಪಿಕೊಂಡಿದ್ದಾರೆ` ಎಂದು ಐಬಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದರು. ಇದರಿಂದ ನೊಂದ ಗಿಲಾನಿ ಪತ್ನಿ ಅನಿಸಾ ಅವರು ಆ ಪತ್ರಿಕೆಯ ಮಾಲೀಕರನ್ನು ಸಂಪರ್ಕಿಸಿ ಆಗಿರುವ ಅನಾಹುತವನ್ನು ತಿಳಿಸಿದ್ದರು. ಮರುದಿನ ಪತ್ರಿಕೆ ಕ್ಷಮಾಪಣೆ ಕೇಳಿತ್ತು.

ನಿಜಾಂಶ ಏನೆಂದರೆ ಗಿಲಾನಿ ಅವರ ಮೇಲೆ `ಅಧಿಕೃತ ರಹಸ್ಯ ಕಾಯ್ದೆ`ಯ ಉಲ್ಲಂಘನೆಯ ಆರೋಪಕ್ಕೆ ಕಾರಣವಾದ ಅವರದ್ದೇ ಕಂಪ್ಯೂಟರ್‌ನಿಂದ ವಶಪಡಿಸಿಕೊಂಡ ದಾಖಲೆ ಭಾರತ ಸರ್ಕಾರದ್ದಾಗಿರದೆ, ಪಾಕಿಸ್ತಾನದ್ದಾಗಿತ್ತು. ಡಾ.ನಾಸಿರ್ ಕಮಾಲ್ ಎಂಬ ಪಾಕಿಸ್ತಾನಿ ರಕ್ಷಣಾ ತಜ್ಞರು ಬರೆದ ಈ ಲೇಖನವನ್ನು ಇಸ್ಲಾಮಾಬಾದ್‌ನ ರಕ್ಷಣಾ ಅಧ್ಯಯನ ಸಂಸ್ಥೆ ಪ್ರಕಟಿಸಿತ್ತು. ಅದನ್ನು ಗಿಲಾನಿ ತಮ್ಮ ಕಂಪ್ಯೂಟರ್‌ನಲ್ಲಿ ಡೌನ್‌ಲೋಡ್ ಮಾಡಿ ಇಟ್ಟುಕೊಂಡಿದ್ದರು.

ಇದು ಆಗಲೇ ರಕ್ಷಣಾ ಖಾತೆಯ ಗ್ರಂಥಾಲಯಗಳಲ್ಲಿ ಲಭ್ಯ ಇತ್ತು. ಪಾಕಿಸ್ತಾನಿಗಳು ಜಮ್ಮು ಮತ್ತು ಕಾಶ್ಮೆರವನ್ನು ಹಾಗೆಂದು ಕರೆಯದೆ `ಇಂಡಿಯನ್ ಹೆಲ್ಡ್ ಕಾಶ್ಮೆರ್` ಎಂದೇ ಈಗಲೂ ಕರೆಯುವುದು. (ಅವರು `ಆಜಾದಿ ಕಾಶ್ಮೆರ` ಎಂದು ಹೇಳುತ್ತಿರುವ ಪ್ರದೇಶವನ್ನು ನಾವು `ಪಾಕಿಸ್ತಾನ ಆಕ್ರಮಿತ ಕಾಶ್ಮೆರ` ಎಂದು ಕರೆಯುತ್ತೇವೆಯಲ್ಲ ಹಾಗೆ). ಇದರ ಅರಿವಿದ್ದ ಐಬಿ ತಾನು ವಶಪಡಿಸಿಕೊಂಡ ದಾಖಲೆಯಲ್ಲಿ `ಇಂಡಿಯನ್‌ಹೆಲ್ಡ್ ಕಾಶ್ಮೆರ` ಎಂದು ಇದ್ದ ಕಡೆಗಳೆಲ್ಲ `ಜಮ್ಮು ಮತ್ತು ಕಾಶ್ಮೆರ` ಎಂದು ತಿದ್ದಿತ್ತು.

ಆಗಲೇ ಡಿಜಿಎಂಐಗೆ ತಪ್ಪಿನ ಅರಿವಾಗಿ ತಾನು ಮೊದಲು ನೀಡಿದ್ದ ಅಭಿಪ್ರಾಯವನ್ನು ವಾಪಸು ಪಡೆದು `ಪ್ರಾರಂಭದಲ್ಲಿ ನಾವು ನೀಡಿದ್ದ ಅಭಿಪ್ರಾಯ ಅತಿರಂಜಿತವಾಗಿತ್ತು. ಈ ದಾಖಲೆ ಎಲ್ಲ ಕಡೆ ಸುಲಭದಲ್ಲಿ ಲಭ್ಯ ಇರುವುದರಿಂದ ಅದಕ್ಕೆ ಭದ್ರತಾ ಮೌಲ್ಯ ಇಲ್ಲ` ಎಂಬ ಪರಿಷ್ಕೃತ ಅಭಿಪ್ರಾಯ ನೀಡಿತ್ತು.

ಅಷ್ಟು ಹೊತ್ತಿಗೆ ಪ್ರಾರಂಭದಿಂದಲೂ ಈ ಪ್ರಕರಣದಲ್ಲಿ ಗಿಲಾನಿ ಬಗ್ಗೆ ಅನುಕಂಪ ಹೊಂದಿದ್ದ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಪ್ರಧಾನಿ ಅಟಲಬಿಹಾರಿ ವಾಜಪೇಯಿಯವರಿಗೆ ಕೂಡಾ ಐಬಿ ಎಡವಿರುವುದನ್ನು ಮನವರಿಕೆ ಮಾಡಿಕೊಟ್ಟಿದ್ದರು.

ಕೊನೆಗೆ ಏಳು ತಿಂಗಳ ನಂತರ ಇಫ್ತಿಕರ್ ಗಿಲಾನಿ ಅವರನ್ನು 2003 ಜೂನ್ 13ರಂದು ಬಿಡುಗಡೆ ಮಾಡಲಾಯಿತು. ಆದರೆ ಯಾರದೋ ಒತ್ತಡಕ್ಕೆ ಸಿಕ್ಕಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದ ಅಧಿಕಾರಿಗಳ ಬಗ್ಗೆ ಯಾವ ವಿಚಾರಣೆಯೂ ನಡೆಯಲಿಲ್ಲ.

ಭಯೋತ್ಪಾದಕರು ಮತ್ತು ನಕ್ಸಲೀಯರ ಜತೆ ಸಂಪರ್ಕ ಕಲ್ಪಿಸಿ ಪತ್ರಕರ್ತರನ್ನು ಬಂಧಿಸಿ ಹಿಂಸಿಸುವ ಕಾರ್ಯ ದೇಶದಾದ್ಯಂತ ಈಗಲೂ ಮುಂದುವರಿದಿದೆ. ಕಳೆದ ಫೆಬ್ರವರಿಯಲ್ಲಿ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಸಿಬ್ಬಂದಿಯ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇರಾನಿ ವಾರ್ತಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಕಾಜ್ಮಿ ಎಂಬ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಐದು ತಿಂಗಳುಗಳಾದರೂ ಅವರು ಬಿಡುಗಡೆಯಾಗಿಲ್ಲ. ಬೆಂಗಳೂರು ಬಾಂಬು ಸ್ಫೋಟಕ್ಕೆ ಸಂಬಂಧಿಸಿದ ಇಬ್ಬರು ಸಾಕ್ಷಿಗಳ ಜತೆ ಮಾತನಾಡಿದ್ದರು ಎನ್ನುವ ಕಾರಣಕ್ಕೆ ದೆಹಲಿಯ ವಾರಪತ್ರಿಕೆಯ ಕೇರಳ ವರದಿಗಾರರಾಗಿದ್ದ ಶಾಹಿನಾ ಎಂಬುವವರ ಮೇಲೆ ಕರ್ನಾಟಕ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.

ಇಫ್ತಿಕರ್ ಗಿಲಾನಿ ಅವರು ನಿರಪರಾಧಿಯಾಗಿ ಹೊರಬಂದ ಮಾತ್ರಕ್ಕೆ ಭಯೋತ್ಪಾದನೆ ಸಂಬಂಧಿ ಆರೋಪಿಗಳೆಲ್ಲರೂ ನಿರಪರಾಧಿಗಳಿರಲಾರರು. ಆದರೆ ಮಾಡಿದ ಆರೋಪಗಳನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲಾಗದ ನಮ್ಮ ಪೊಲೀಸ್ ತನಿಖಾ ವ್ಯವಸ್ಥೆಯಲ್ಲಿನ ದೋಷಗಳಿಂದಾಗಿ ನಿರಪರಾಧಿಗಳು ಅಪರಾಧಿಯಾಗುತ್ತಿರುವುದು ಮಾತ್ರವಲ್ಲ, ಅಪರಾಧಿ ನಿರಪರಾಧಿ ಎಂದು ಅನಿಸಿಕೊಂಡು ತಪ್ಪಿಸಿಕೊಳ್ಳುವ ಸಾಧ್ಯತೆಗಳೂ ಇವೆ.

ಮೊದಲನೆಯದರಷ್ಟೇ ಎರಡನೆಯದೂ ಅಪಾಯಕಾರಿ. ಆರೋಪಗಳನ್ನು ಹೊರಿಸಲು ಒಂದೆರಡು ನಾಲಿಗೆ, ಒಂದಷ್ಟು ಕಿವಿಗಳಷ್ಟೇ ಸಾಕು. ಆದರೆ ಅದನ್ನು ಸಾಬೀತುಪಡಿಸಲು ಅಷ್ಟೇ ಸಾಲದು, ಸತ್ಯದ ನೆರವು ಕೂಡಾ ಬೇಕಾಗುತ್ತದೆ.

Monday, August 27, 2012

ನ್ಯಾಯಾಂಗದ ಗಾಜಿನ ಮನೆಗೆ ಕಲ್ಲು ಹೊಡೆದ ಮಮತಾ August 27, 2012

ನ್ಯಾಯಾಂಗದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಕಲ್ಲೆಸೆಯಲು ಹೊರಟವರು ಮೊದಲು ಗಾಜಿನ ಮನೆಯಲ್ಲಿ ಕೂತಿರುವ ನ್ಯಾಯಾಂಗದ ಕಡೆ  ಕಣ್ಣುಹಾಯಿಸಬೇಕು.  ಮಮತಾ ಬ್ಯಾನರ್ಜಿ ಅವರಿಗೆ ಈ ರೀತಿಯ ಆರೋಪ ಹೊರಿಸುವುದಕ್ಕೆ ವೈಯಕ್ತಿಕವಾದ ಕಾರಣಗಳು ಇದ್ದಿರಬಹುದು.

ಆದರೆ ಅವರು ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಎದೆಮುಟ್ಟಿ ಹೇಳುವ ಧೈರ್ಯ ವಕೀಲರು, ನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನೊಳಗೊಂಡ ನ್ಯಾಯಾಂಗ ವ್ಯವಸ್ಥೆಗೆ ಇದೆಯೇ?

2007ರಲ್ಲಿ `ಟ್ರಾನ್ಸಪರೆನ್ಸಿ ಇಂಟರ್‌ನ್ಯಾಷನಲ್` ಮತ್ತು ದೆಹಲಿ ಮೂಲದ ಸಂಶೋಧನಾ ಸಂಸ್ಥೆ `ಮಾಧ್ಯಮ ಅಧ್ಯಯನ ಕೇಂದ್ರ` ಭಾರತದಲ್ಲಿನ ಭ್ರಷ್ಟಾಚಾರದ ಬಗ್ಗೆ ಅಧ್ಯಯನ ನಡೆಸಿತ್ತು.  ಸಾರ್ವಜನಿಕ ಸೇವೆ ನೀಡುವ ಮತ್ತು ಪಡೆಯುವ ವ್ಯಕ್ತಿಗಳ ಜತೆಗಿನ ಸಂದರ್ಶನವೂ ಸೇರಿದಂತೆ ಇಪ್ಪತ್ತು ರಾಜ್ಯಗಳ 14,405 ವ್ಯಕ್ತಿಗಳ ಪ್ರತಿಕ್ರಿಯೆ ಪಡೆದು ಈ ಎರಡು ಸಂಸ್ಥೆಗಳು ಸಮೀಕ್ಷಾ ವರದಿಯೊಂದನ್ನು ನೀಡಿದ್ದವು.

`ಹನ್ನೊಂದು ಬಗೆಯ ಸಾರ್ವಜನಿಕ ಸೇವೆಗಳನ್ನು ಪಡೆಯಲು ಭಾರತೀಯರು ವರ್ಷಕ್ಕೆ 21,068 ಕೋಟಿ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡುತ್ತಿದ್ದಾರೆ. ಇದರಲ್ಲಿ ನ್ಯಾಯಾಂಗದ ಪಾಲು 2,630 ಕೋಟಿ ರೂಪಾಯಿ.

  ಶೇಕಡಾ 59ರಷ್ಟು ವಕೀಲರು, ಶೇಕಡಾ 30ರಷ್ಟು ನ್ಯಾಯಾಲಯದ ಅಧಿಕಾರಿಗಳು ಮತ್ತು ಶೇಕಡಾ ಐದರಷ್ಟು ನ್ಯಾಯಮೂರ್ತಿಗಳು ಲಂಚಪಡೆಯುತ್ತಿದ್ದಾರೆ` ಎಂದು ಆ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಸ್.ಪಿ.ಭರೂಚಾ ಅವರು ಹತ್ತುವರ್ಷಗಳ ಹಿಂದೆಯೇ ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. `

ಶೇಕಡಾ 20ರಷ್ಟು ನ್ಯಾಯಮೂರ್ತಿಗಳು ಭ್ರಷ್ಟರು` ಎಂಬ ಅವರ ಆರೋಪ ಸಾರ್ವಜನಿಕವಾಗಿ ಸಂಚಲನವನ್ನುಂಟುಮಾಡಿತ್ತು. ಈ ಹತ್ತು ವರ್ಷಗಳ ಅವಧಿಯಲ್ಲಿ ನ್ಯಾಯಾಂಗದ ಭ್ರಷ್ಟಾಚಾರದ ಮಟ್ಟ ಕಡಿಮೆಯಾಗಿದೆ ಎಂದು ಹೇಳಲು ಆಧಾರಗಳು ಸಿಗುತ್ತಿಲ್ಲ, ಹೆಚ್ಚಾಗಿದೆ ಎಂದು ಅನುಮಾನ ಪಡಲು ಕಾರಣಗಳಿವೆ.

ನ್ಯಾ.ಭರೂಚಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಆರುತಿಂಗಳ ನಂತರ ಪಂಜಾಬ್ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಶಾಮೀಲಾಗಿದ್ದ ಕೋಟ್ಯಂತರ ರೂಪಾಯಿ ಲಂಚದ ಆರೋಪದ ಲೋಕಸೇವಾ ಹಗರಣ ಬಯಲಾಯಿತು. ಪ್ರಶ್ನೆಪತ್ರಿಕೆಯ ಸೋರಿಕೆಗೆ ಅವಕಾಶ ನೀಡಿರುವುದು ಮಾತ್ರವಲ್ಲ ಉತ್ತರಪತ್ರಿಕೆಗಳನ್ನು ತಿದ್ದಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರೆಂದು ರಾಜ್ಯ ಜಾಗೃತದಳ ಆರೋಪ ಮಾಡಿತ್ತು.

ಭೂ ಮಾಫಿಯಾಗಳಿಂದ ಹಣ-ಹೆಂಡ-ಹೆಣ್ಣುಗಳನ್ನು ಪಡೆದು ತೀರ್ಪು ನೀಡಿದ್ದಾರೆಂಬ ಆರೋಪದ ಮೇಲೆ ಸಿಬಿಐ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಶಮಿತ್ ಮುಖರ್ಜಿ ಅವರನ್ನು ಬಂಧಿಸಿತ್ತು. ನ್ಯಾಯಾಲಯದ ಸಿಬ್ಬಂದಿಯ ಭವಿಷ್ಯನಿಧಿ ಹಣವನ್ನು ದುರ್ಬಳಕೆ ಮಾಡಿದ್ದಾರೆಂದು ಸುಪ್ರೀಂಕೋರ್ಟ್‌ನಿಂದ ಹಿಡಿದು ಕೆಳ ನ್ಯಾಯಾಲಯದವರೆಗಿನ 34 ನ್ಯಾಯಮೂರ್ತಿಗಳ ವಿರುದ್ಧ ಆರೋಪ ಕೇಳಿಬಂದಿತ್ತು.

ಅಹ್ಮದಾಬಾದ್‌ನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ 40,000 ರೂಪಾಯಿ ಹಣ ಪಡೆದು ರಾಷ್ಟ್ರಪತಿಗಳ ವಿರುದ್ಧವೇ ಬಂಧನದ ವಾರೆಂಟ್ ಹೊರಡಿಸಿರುವುದನ್ನು ಒಂದು ಟಿವಿಚಾನೆಲ್ ಕುಟುಕುಕಾರ್ಯಾಚರಣೆ ಮೂಲಕ ಬಯಲಿಗೆಳೆದಿತ್ತು. ಅಕ್ರಮ ಗಣಿಗಾರಿಕೆಯ ಆರೋಪ ಹೊತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರಿಗೆ ಸಂಬಂಧಿಸಿದ ಜಾಮೀನು ನೀಡಿಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಆಂಧ್ರಪ್ರದೇಶದ ನಾಲ್ವರು ನ್ಯಾಯಾಧೀಶರು ಕಂಬಿ ಎಣಿಸುತ್ತಿರುವುದು ಇತ್ತೀಚಿನ ಉದಾಹರಣೆ.

ಭ್ರಷ್ಟಾಚಾರದ ವಿಷಯದಲ್ಲಿ ಈಗಲೂ ನ್ಯಾಯಾಂಗವನ್ನು ಕಾರ್ಯಾಂಗ ಮತ್ತು ಶಾಸಕಾಂಗಗಳ ಸಮಕ್ಕೆ ಹೋಲಿಸಲಾಗದು. ನಮ್ಮ ಬಹುಸಂಖ್ಯಾತ ನ್ಯಾಯಮೂರ್ತಿಗಳು ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸುವ ಪ್ರಾಮಾಣಿಕರೆನ್ನುವುದು ನಿಜ. ಆದರೆ ಕೆಳನ್ಯಾಯಾಲಯಗಳಿಗೆ ಸೀಮಿತವಾಗಿದ್ದ ಭ್ರಷ್ಟಾಚಾರದ ವೈರಸ್ ನಿಧಾನವಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೂ ಪ್ರವೇಶಿಸಿದೆ.

ಸಂವಿಧಾನದ ಉಳಿದೆರಡು ಅಂಗಗಳ ರೀತಿಯಲ್ಲಿ ನ್ಯಾಯಾಂಗಕ್ಕೆ ತಗಲಿರುವ ರೋಗವನ್ನು ಸುಲಭದಲ್ಲಿ ನಿಯಂತ್ರಿಸುವುದು ಕಷ್ಟ. ಇದಕ್ಕೆ ಮೊದಲನೆಯ ಕಾರಣ- ನ್ಯಾಯಾಂಗದ ಭ್ರಷ್ಟತೆಯ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಾರ್ಯಾಂಗ ಮತ್ತು ಶಾಸಕಾಂಗ ಮಾತ್ರವಲ್ಲ ಮಾಧ್ಯಮರಂಗವೂ ಉಳಿಸಿಕೊಳ್ಳದೆ ಇರುವುದು. ಎರಡನೆಯ ಕಾರಣ-ಉಳಿದ ಮೂರು ಅಂಗಗಳನ್ನೂ ಮೀರಿದ ವಿಶೇಷ ರಕ್ಷಣೆ (ಇಮ್ಯುನಿಟಿ)ಯನ್ನು ನ್ಯಾಯಾಂಗ ಪಡೆದಿರುವುದು.

ಭಾರತದಲ್ಲಿ ಈಗಲೂ ನ್ಯಾಯಾಂಗ ಎನ್ನುವುದು ಒಂದು `ಪವಿತ್ರಗೋವು`. ಬೀದಿಯಲ್ಲಿ ನಿಂತು ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ಆಡುವ ಮಾತುಗಳನ್ನು ನ್ಯಾಯಮೂರ್ತಿಗಳ ಬಗ್ಗೆ ಮಾತನಾಡಲಾಗದು. ನ್ಯಾಯಾಂಗ ನಿಂದನೆಯ ಕತ್ತಿ ತಲೆ ಮೇಲೆ ಸದಾ ತೂಗುತ್ತಿರುತ್ತದೆ.

ಬಹುಪದರಗಳ ಈ `ಆತ್ಮರಕ್ಷಣೆ`ಯ ವ್ಯವಸ್ಥೆಯೇ ನ್ಯಾಯಾಂಗದ ಆರೋಗ್ಯವನ್ನು ಒಳಗಿಂದೊಳಗೆ ಕೆಡಿಸುತ್ತಿದೆಯೇ?ಈಗಿನ ಕಾನೂನಿನ ಪ್ರಕಾರ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ಪೂರ್ವಾನುಮತಿ ಇಲ್ಲದೆ ನ್ಯಾಯಮೂರ್ತಿಗಳ ವಿರುದ್ಧ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸುವಂತಿಲ್ಲ.

ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದೂ ಸಾಧ್ಯ ಇಲ್ಲ. ಹೈಕೋರ್ಟ್ ಇಲ್ಲವೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳನ್ನು ಸಂಸತ್‌ನ ಎರಡೂ ಸದನಗಳ ಸದಸ್ಯರು ಬಹುಮತದ `ವಾಗ್ದಂಡನೆ` ಮೂಲಕವಷ್ಟೇ ಕಿತ್ತುಹಾಕಬಹುದು. ಆದರೆ  ಇಲ್ಲಿಯವರೆಗೆ ಯಾವ ನ್ಯಾಯಮೂರ್ತಿಯವರನ್ನೂ `ವಾಗ್ದಂಡನೆ`ಯ ಮೂಲಕ ಕಿತ್ತುಹಾಕಲು ಸಂಸತ್‌ಗೆ ಸಾಧ್ಯವಾಗಿಲ್ಲ. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅವರಿಗೆ ವಾಗ್ದಂಡನೆ  ವಿಧಿಸಬೇಕೆಂಬ ಮಸೂದೆಗೆ ಸಂಸತ್‌ನಲ್ಲಿ ಅಂಗೀಕಾರವೇ ಸಿಗದೆ ಬಿದ್ದುಹೋಗಿತ್ತು. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಗೈರುಹಾಜರಾಗಿದ್ದರು.

ನ್ಯಾಯಾಲಯದ ರಿಸೀವರ್ ಆಗಿ ಸ್ವೀಕರಿಸಿದ್ದ 24 ಲಕ್ಷ ರೂಪಾಯಿಯನ್ನು ದುರುಪಯೋಗ ಮಾಡಿಕೊಂಡಿದ್ದ ಕೊಲ್ಕೊತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸೌಮಿತ್ರಸೇನ್ ವಿರುದ್ಧದ ವಾಗ್ದಂಡನೆಗೆ ಲೋಕಸಭೆ ಅಂಗೀಕಾರ ನೀಡಿದರೂ, ಅದು ರಾಜ್ಯಸಭೆಗೆ ಹೋಗುವ ಮೊದಲೇ ಅವರು  ರಾಜೀನಾಮೆ ನೀಡಿದ್ದರು. ತನಿಖೆ ನಡೆಯುತ್ತಿರುವಾಗಲೇ ನ್ಯಾಯಮೂರ್ತಿ ಪಿ.ಡಿ.ದಿನಕರನ್ ರಾಜೀನಾಮೆ ನೀಡಿದ ಕಾರಣ  ಅವರಿಗೂ ವಾಗ್ದಂಡನೆ ನೀಡಲು ಸಾಧ್ಯವಾಗಲಿಲ್ಲ.

ಆರೋಪ ಹೊತ್ತ ನ್ಯಾಯಮೂರ್ತಿಗಳ ವಿಚಾರಣೆ ನಡೆಸುವ ಈಗಿನ ವ್ಯವಸ್ಥೆ ತೀರಾ ದುರ್ಬಲವಾಗಿದೆ. ಇದೊಂದು `ಗೃಹಸಮಿತಿ`. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ನ್ಯಾಯಾಂಗ ಆಯೋಗದಲ್ಲಿ ಹೈಕೋರ್ಟ್‌ನ ತಲಾ ಇಬ್ಬರು ನ್ಯಾಯಮೂರ್ತಿಗಳು ಸದಸ್ಯರು.

ನ್ಯಾಯಮೂರ್ತಿಗಳ ಮೇಲಿನ ಆರೋಪ ಸಾಬೀತಾದಾರೂ ಆಯೋಗ ಹೆಚ್ಚೆಂದರೆ ಆರೋಪಿ ನ್ಯಾಯಮೂರ್ತಿಗಳನ್ನು ಅಮಾನತ್‌ನಲ್ಲಿಡಬಹುದು ಇಲ್ಲವೆ ವರ್ಗಾವಣೆ ಮಾಡಬಹುದು. ಆಯೋಗಕ್ಕೆ ಕಾನೂನುಬದ್ಧ ಅಧಿಕಾರ ಇಲ್ಲ. ಆರೋಪಿ ಸ್ಥಾನದಲ್ಲಿರುವವರು ಆಯೋಗದ ನಿರ್ಧಾರವನ್ನು ಪ್ರಶ್ನಿಸಬಹುದು.

ನ್ಯಾಯಾಂಗ ಎದುರಿಸುತ್ತಿರುವ ಈಗಿನ ಆರೋಪಗಳಿಗೆ ನ್ಯಾಯಮೂರ್ತಿಗಳ ನೇಮಕದಲ್ಲಿರುವ ದೋಷವೂ ಕಾರಣ. 1950ರಿಂದ 1993ರ ವರೆಗೆ ನ್ಯಾಯಮೂರ್ತಿಗಳ ನೇಮಕದ ಅಧಿಕಾರ ಶಾಸಕಾಂಗದ ಕೈಯಲ್ಲಿಯೇ ಇತ್ತು. `ಸೆಕೆಂಡ್ ಜಡ್ಜಸ್` ಎಂದೇ ಜನಪ್ರಿಯವಾಗಿರುವ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ ಒಂಬತ್ತು ಸದಸ್ಯರ ಪೀಠ ಸಂವಿಧಾನದ 124ನೇ ಕಲಂ ಅನ್ನು ಪುನರ್‌ವ್ಯಾಖ್ಯಾನಿಸಿ ನ್ಯಾಯಮೂರ್ತಿಗಳ ನೇಮಕದಲ್ಲಿ ನ್ಯಾಯಾಂಗಕ್ಕೆ ಪರಮಾಧಿಕಾರವನ್ನು ನೀಡಿತ್ತು.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳದ್ದೇ ಅಂತಿಮ ನಿರ್ಧಾರ. ಈ ಬಗ್ಗೆ ಕೇಂದ್ರ ಸರ್ಕಾರದ `ಸಲಹೆ`ಪಡೆದರಷ್ಟೇ ಸಾಕು, `ಅನುಮತಿ` ಬೇಕಾಗಿಲ್ಲ. ಮುಖ್ಯನ್ಯಾಯಮೂರ್ತಿಗಳು ಇಬ್ಬರು ಹಿರಿಯಸಹೋದ್ಯೋಗಿಗಳ ಜತೆ ಸಮಾಲೋಚನೆ ನಡೆಸಿ ಕೈಗೊಳ್ಳುವ ನಿರ್ಧಾರವನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲೇಬೇಕು. ಕೆಲವು ವಿವಾದಾತ್ಮಕ ನ್ಯಾಯಮೂರ್ತಿಗಳ ಪ್ರಕರಣವನ್ನು ಪರಿಶೀಲಿಸಿದರೆ ನೇಮಕಾತಿಯ ಈ ವ್ಯವಸ್ಥೆಯಲ್ಲಿನ ದೋಷ ಸ್ಪಷ್ಟವಾಗುತ್ತದೆ.

ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ಸೌಮಿತ್ರಸೇನ್ ಹಣ ದುರುಪಯೋಗ ಮಾಡಿಕೊಂಡದ್ದು 1993ರಲ್ಲಿ. ಆದರೆ ಅದು ಬೆಳಕಿಗೆ ಬಂದದ್ದು 2009ರಲ್ಲಿ. ನ್ಯಾಯಮೂರ್ತಿ ಸೇನ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಮೊದಲು ಹಳೆಯ ಆರೋಪಗಳನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಯಾಕೆ ಪರಿಶೀಲಿಸಿರಲಿಲ್ಲ? ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾಗ ಪಿ.ಡಿ.ದಿನಕರನ್ ಅವರು ಅಕ್ರಮವಾಗಿ ನೂರಾರು ಎಕರೆ ಜಮೀನು ಕಬಳಿಸಿದ್ದಾರೆ ಎನ್ನುವುದು ಆರೋಪ.

ಆದರೆ ಅದು ಬಯಲಿಗೆ ಬಂದಿರುವುದು ಅವರನ್ನು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ ಸಂದರ್ಭದಲ್ಲಿ. ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದರೆ ಸುಪ್ರೀಂಕೋರ್ಟ್ ಸಮಿತಿ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಹೇಗೆ ನೇಮಿಸಿತು?

ಇದು ಆರೋಪಕ್ಕೊಳಗಾಗಿರುವ ಒಬ್ಬಿಬ್ಬರು ನ್ಯಾಯಮೂರ್ತಿಗಳಿಗೆ ಸಂಬಂಧಿಸಿದ ಲೋಪಗಳಲ್ಲ. ಕಳೆದ ಐದಾರು ವರ್ಷಗಳ ಅವಧಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಹಲವಾರು ನ್ಯಾಯಮೂರ್ತಿಗಳ ಹಿನ್ನೆಲೆ ಸಂಶಯಾಸ್ಪದವಾಗಿಯೇ ಇದ್ದರೂ ಅವರೆಲ್ಲ ಸಲೀಸಾಗಿ  ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

 ಈ ಎಲ್ಲ ಬೆಳವಣಿಗೆಗಳನ್ನು ಅವಲೋಕಿಸಿದ ಯಾರೂ ಕೂಡಾ ನ್ಯಾಯಾಂಗ ಎನ್ನುವುದು 50ವರ್ಷಗಳ ಹಿಂದಿನಷ್ಟೇ ಆರೋಗ್ಯಕರವಾಗಿದೆ ಎಂದು ಹೇಳಲಾರರು. ಆರೋಗ್ಯ ಹಾಳಾಗಿದ್ದರೆ ಚಿಕಿತ್ಸೆ ಅನಿವಾರ್ಯ. ಆದರೆ ನಮ್ಮ ಸಂವಿಧಾನದಲ್ಲಿ ನ್ಯಾಯಾಂಗದ ಅನಾರೋಗ್ಯಕ್ಕೆ ಔಷಧಿ ಏನೆಂದು ಹೇಳಿಲ್ಲ.

ಭವಿಷ್ಯದಲ್ಲಿ ನ್ಯಾಯಮೂರ್ತಿಗಳ ಪ್ರಾಮಾಣಿಕತೆಯನ್ನೇ ಸಂಶಯಿಸುವಂತಹ ದಿನಗಳು ಬರಬಹುದೆಂದು ಸಂವಿಧಾನ ರಚನೆಯ ಕಾಲದಲ್ಲಿ  ಸ್ವತ: ವಕೀಲರಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ಯಾರೂ ಊಹಿಸಿರಲಿಲ್ಲವೇನೋ? ನ್ಯಾಯಾಂಗವನ್ನು ಪ್ರಶ್ನಾತೀತವಾಗಿ ಉಳಿಸಿಕೊಳ್ಳಬೇಕೆಂಬ ಅವರ ಸದಾಶಯವೂ ಇದಕ್ಕೆ ಕಾರಣ ಇರಬಹುದು. ಆದರೆ ಈ ಭರವಸೆಯನ್ನು ನ್ಯಾಯಾಂಗ ಉಳಿಸಿಕೊಂಡಿದೆಯೇ?

ಇತ್ತೀಚಿನ ವರ್ಷಗಳಲ್ಲಿ ಬಯಲಾಗುತ್ತಿರುವ ನ್ಯಾಯಾಂಗದ ಹಗರಣಗಳ ನಂತರ ನ್ಯಾಯಮೂರ್ತಿಗಳನ್ನು ಕೂಡಾ ಸಮಾಜಕ್ಕೆ ಉತ್ತರದಾಯಿಯನ್ನಾಗಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂವಿಧಾನ ಪುನರ್‌ಪರಿಶೀಲನಾ ಆಯೋಗ  `ರಾಷ್ಟ್ರೀಯ ನ್ಯಾಯಾಂಗ ಆಯೋಗ` ರಚನೆಗೆ ಶಿಫಾರಸು ಮಾಡಿತ್ತು. ಎನ್‌ಡಿಎ ಸರ್ಕಾರದ ಕಾಲದಲ್ಲಿ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಯ ಅಧಿಕಾರವನ್ನೂ ಒಳಗೊಂಡ `ರಾಷ್ಟ್ರೀಯ ನ್ಯಾಯಾಂಗ ಆಯೋಗ`ದ ಮಸೂದೆಯನ್ನು ರೂಪಿಸಿತ್ತು.

ಕೇಂದ್ರ ಕಾನೂನು ಸಚಿವರು ಮತ್ತು ಕೇಂದ್ರ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರನ್ನೊಳಗೊಂಡ ಆಯೋಗದ ಮುಂದೆ ನ್ಯಾಯಮೂರ್ತಿಗಳು ಆಸ್ತಿ ಘೋಷಣೆ ಮಾಡಬೇಕು ಎಂದು ಮಸೂದೆ ಹೇಳಿತ್ತು. ಆಗಲೂ ನ್ಯಾಯಮೂರ್ತಿಗಳು ಆಯೋಗ ರಚನೆಯನ್ನು ವಿರೋಧಿಸಿದ್ದರು.

ವಿಳಂಬವಾಗಿಯಾದರೂ ಈ ವರ್ಷದ ಮೇ ತಿಂಗಳಲ್ಲಿ ಲೋಕಸಭೆ `ನ್ಯಾಯಾಂಗ ಗುಣಮಟ್ಟ ಮತ್ತು ಉತ್ತರದಾಯಿತ್ವ ಮಸೂದೆ 2002`ಕ್ಕೆ ಅನುಮೋದನೆ ನೀಡಿದೆ. 2011ರಲ್ಲಿ ಮಂಡನೆಯಾಗಿದ್ದ ಈ ಮಸೂದೆಯನ್ನು ತಿದ್ದುಪಡಿಯೊಂದಿಗೆ ಮರಳಿ ಮಂಡಿಸಲಾಗಿತ್ತು. ಆದರೆ ಆಗಲೇ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಅವರು  ಮಸೂದೆಯ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯಾಯಾಂಗದ ಸುಧಾರಣೆಯ ಪ್ರಯತ್ನ ನಡೆದಾಗಲೆಲ್ಲ, ಅದನ್ನು ನ್ಯಾಯಾಂಗದ ಮೇಲೆ ಶಾಸಕಾಂಗದ ಆಕ್ರಮಣ ಎಂದೇ ಬಿಂಬಿಸುತ್ತಾ ನ್ಯಾಯಮೂರ್ತಿಗಳು ಆತ್ಮರಕ್ಷಣೆಗಿಳಿಯುವುದು ಸಹಜ. ಈಗಿನ ಮುಖ್ಯನ್ಯಾಯಮೂರ್ತಿಗಳು ಅದನ್ನು ಮಾತಿನಲ್ಲಿ ಹೇಳದೆ ಇದ್ದರೂ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ ತನ್ನ ಕಬಂಧಬಾಹುಗಳನ್ನು ಎಲ್ಲೆಡೆ ಚಾಚುತ್ತಿರುವ ಸಮಯದಲ್ಲಿ ಎಲ್ಲ ವ್ಯವಸ್ಥೆಗಳೂ  ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಿ ಆಗಿರಬೇಕು ಎಂದು ಸಾರ್ವಜನಿಕರು ಬಯಸುತ್ತಿದ್ದಾರೆ. ಇಂತಹ ಸಮಯದಲ್ಲಿ ಬಹಳ ದಿನಗಳ ಕಾಲ ನ್ಯಾಯಾಂಗ ಮುಸುಕುಹಾಕಿಕೊಂಡು ತನ್ನನ್ನು ರಕ್ಷಿಸಿಕೊಳ್ಳುವುದು ಸಾಧ್ಯವಾಗಲಾರದು.

Friday, August 24, 2012

ಬೂದಿ ಮುಚ್ಚಿದ ಕೆಂಡದಂತೆ ಸುಡುತ್ತಿರುವ ವಲಸೆ ಸಮಸ್ಯೆ August 20, 2012

ಯಾರೋ ಕಿಡಿಗೇಡಿಗಳು ಹಚ್ಚಿದ ಗಾಳಿಮಾತಿನ ಕಿಡಿಗಳಲ್ಲಿ ತಮ್ಮನ್ನು ಸುಟ್ಟುಬಿಡುವ ಬೆಂಕಿಯನ್ನು ಕಂಡು ಬೆದರಿ ಬೆಂಗಳೂರು ಬಿಟ್ಟು ಓಡಿಹೋಗಿರುವ ಈಶಾನ್ಯ ರಾಜ್ಯದ ಜನರು ಮುಂದಿನ ದಿನಗಳಲ್ಲಿ ಮರಳಿ ಬರಬಹುದು. ತಾವು ಊರು ಬಿಟ್ಟು ಹೋಗುವಂತಹ ಭಯಾನಕ ಪರಿಸ್ಥಿತಿ ಬೆಂಗಳೂರಿನಲ್ಲಿ ಇಲ್ಲ ಎನ್ನುವುದು ನಿಧಾನವಾಗಿ ಅರಿವಾಗಿ ಅವರು ಪಶ್ಚಾತಾಪಪಡಲೂ ಬಹುದು.
 
ಈ ಭಯಭೀತ ವಾತಾವರಣದ ನಿರ್ಮಾಣಕ್ಕೆ ಕಾರಣರಾದವರನ್ನು ಪೊಲೀಸರು ಬಂಧಿಸಿ ಸಂಚನ್ನು ಬಯಲುಮಾಡಿದರೆ ಮುಖ್ಯಮಂತ್ರಿಗಳು ಮತ್ತು ಅವರ ಸಹೊದ್ಯೋಗಿಗಳು ನೀಡಿರುವ ಆಶ್ವಾಸನೆಯನ್ನು ಅವರು ನಂಬಲೂಬಹುದು. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸದೆ ಇದ್ದರೆ ತಮ್ಮನ್ನು ತಾವೇ ಸಮಾಧಾನಪಡಿಸಿಕೊಂಡು ಇದೊಂದು ದುಃಸ್ವಪ್ನ ಎಂದು ಅವರು ಮರೆತುಬಿಡಬಹುದು. ಇಷ್ಟಕ್ಕೆ ಎಲ್ಲ ಸಮಸ್ಯೆಗಳು ಶಾಶ್ವತ ಪರಿಹಾರ ಕಂಡು ವಲಸೆ ಬಂದವರು ಮತ್ತು ಸ್ಥಳೀಯರು ಹಾಲುಜೇನಿನಂತೆ ಒಂದಾಗಿ ನೂರುಕಾಲ ನೆಮ್ಮದಿಯಿಂದ ಬಾಳ್ವೆಮಾಡಬಹುದೇ?

ಪೊಲೀಸರ ತನಿಖೆ, ಅಪರಾಧಿಗಳ ಪತ್ತೆ, ರಾಜ್ಯದ ರಾಜಕಾರಣಿಗಳೆಲ್ಲ ಕೂಡಿ ನೀಡಿರುವ ಭದ್ರತೆಯ ಆಶ್ವಾಸನೆ ...ಇವೆಲ್ಲವೂ ಮೊನ್ನೆ ನಡೆದ ನಿರ್ದಿಷ್ಟ ದುರ್ಘಟನೆಗೆ ತಾತ್ಕಾಲಿಕ ರೂಪದ ಪರಿಹಾರ ಅಷ್ಟೆ. ಇದಕ್ಕೆ ಕಾರಣವಾದ ಸಮಸ್ಯೆಯ ಬೇರುಗಳು ಇನ್ನೂ ಆಳದಲ್ಲಿವೆ. 

ಅವುಗಳನ್ನು ಹುಡುಕಿತೆಗೆದು ಪರಿಹಾರ ಕಂಡುಕೊಳ್ಳದೆ ಇದ್ದಲ್ಲಿ ಇಂತಹ ಸಂಘರ್ಷಗಳು ಪುನರಾವರ್ತನೆಯಾಗುವುದನ್ನು ತಡೆಯುವುದು ಸಾಧ್ಯವಾಗಲಾರದು. ಆ ಸಮಸ್ಯೆಯ ಹೆಸರು ವಲಸೆ. ಬೆಂಗಳೂರನ್ನು ಮಾತ್ರವಲ್ಲ ದೇಶದ ಎಲ್ಲ ಮಹಾನಗರಗಳನ್ನೂ ಕಾಡುತ್ತಿರುವ ಮತ್ತು ಭವಿಷ್ಯದಲ್ಲಿ ಭೂತಾಕಾರವಾಗಿ ಬೆಳೆದು ಕಾಡಲಿರುವ ಸಮಸ್ಯೆ ಇದು. ಕೇಂದ್ರ ಯೋಜನಾ ಆಯೋಗದ ಮಟ್ಟದಲ್ಲಿ ಈ ಬಗ್ಗೆ ಅಧ್ಯಯನಗಳು ನಡೆಯುತ್ತಲೇ ಇದ್ದರೂ ಪರಿಹಾರವನ್ನು ಮಾತ್ರ ಕಂಡುಕೊಳ್ಳಲಾಗಿಲ್ಲ.

ಬಹುಶಃ ಹುಟ್ಟಿದ ಊರಿನಲ್ಲಿಯೇ ಬಯಸಿದ್ದೆಲ್ಲವೂ ಸಿಕ್ಕಿಬಿಟ್ಟರೆ ಯಾರೂ ಊರು ಬಿಡಲಾರರೇನೋ? ವಲಸೆ ಬಂದವರಲ್ಲಿ ಯಾರೂ ಕೂಡಾ ಬಹಳ ಸಂತೋಷದಿಂದ ಊರು ಬಿಟ್ಟು ಬಂದಿರುವುದಿಲ್ಲ, ವಲಸೆ ಬಂದವರೆಲ್ಲರೂ ಬಹಳ ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದು ಹೇಳುವುದೂ ಸಾಧ್ಯ ಇಲ್ಲ.
 
ವಲಸೆಕೋರರ ಮನಸ್ಸು ಇರುವುದೇ ಹಾಗೆ. ಹುಟ್ಟೂರಿನ ಬೇರು ಕಳಚಿಕೊಂಡು ಬೇರೆ ಊರುಗಳಲ್ಲಿ ನೆಲೆ ಕಂಡುಕೊಂಡಿರುವ ಈ ಜನ ಸದಾ ಅಸುರಕ್ಷತೆಯಿಂದ ಬಳಲುತ್ತಾ ಇರುತ್ತಾರೆ. ಬೀದಿಯಲ್ಲಿ ಅಪರಿಚಿತರು ಸುಮ್ಮನೆ ದಿಟ್ಟಿಸಿ ನೋಡಿದರೂ ಅವರ ಎದೆ ಬಡಿದುಕೊಳ್ಳುತ್ತದೆ. ಒಂಟಿಯಾಗಿ ಹೊರಟಾಗ ಪಕ್ಕದಲ್ಲಿ ನೆರಳೊಂದು ಹಾದುಹೋದರೂ ಅವರು ಬೆಚ್ಚಿಬೀಳುತ್ತಾರೆ. 

ಸಣ್ಣಪುಟ್ಟ ಕಾಯಿಲೆಗಳು ಕೂಡಾ ಅವರನ್ನು ಮಾನಸಿಕವಾಗಿ ಇನ್ನಷ್ಟು ದುರ್ಬಲರನ್ನಾಗಿ ಮಾಡುತ್ತದೆ.  ಮನೆಯಿಂದ ಹೊರಗೆಹೋದವರು ಹಿಂದಿರುಗುವುದು ವಿಳಂಬವಾದ ಕೂಡಲೇ ಕೆಟ್ಟಯೋಚನೆಗಳು ಸುಳಿದಾಡುತ್ತಿರುತ್ತವೆ.
 
ಇದರ ಜತೆಗೆ ಊರಲ್ಲಿರುವ ವಯಸ್ಸಾದ ತಂದೆ-ತಾಯಿ, ಜತೆಯಲ್ಲಿ ಆಡಿ ಬೆಳೆದ ಸೋದರ - ಸೋದರಿಯರು, ಸಲಿಗೆಯಿಂದ ಎಲ್ಲವನ್ನೂ ಹಂಚಿಕೊಳ್ಳಲು ಸಾಧ್ಯ ಇರುವಂತಹ ಗೆಳೆಯ-ಗೆಳತಿಯರು..ಹೀಗೆ ಎಲ್ಲರ ನೆನಪುಗಳು ಕಾಡಲಾರಂಭಿಸುತ್ತವೆ. ಇವೆಲ್ಲ ಹೇಳಿ ಅರ್ಥವಾಗುವಂತಹದ್ದಲ್ಲ, ಅನುಭವಿಸಿ ತಿಳಿದುಕೊಳ್ಳಬೇಕು.

ನೂರಾರು ಬಗೆಯ ವಲಸೆಗಳಿದ್ದರೂ ಇದರಲ್ಲಿ ಪ್ರಧಾನವಾಗಿ ಎರಡು ಗುಂಪುಗಳಿವೆ. ಮೊದಲನೆಯದು ದೈಹಿಕಶ್ರಮದ ಉದ್ಯೋಗ ಮಾಡುತ್ತಿರುವವರ ಗುಂಪು, ಎರಡನೆಯದು ಕಚೇರಿಗಳಲ್ಲಿ ಬಿಳಿ ಕಾಲರ್ ಉದ್ಯೋಗದಲ್ಲಿರುವವರ ಗುಂಪು. ಬರಗಾಲ, ನೆರೆಹಾವಳಿ, ಭೂಕಂಪ ಮೊದಲಾದ ಪ್ರಾಕೃತಿಕ ವಿಕೋಪಗಳಿಂದಾಗಿ ನಿರ್ಗತಿಕರಾದವರು, ಜಮೀನ್ದಾರಿ ವ್ಯವಸ್ಥೆಯ ಶೋಷಣೆಗೆ ಸಿಕ್ಕವರು, ಜಾತಿ-ಧರ್ಮ ಆಧಾರಿತ ದ್ವೇಷ ಭುಗಿಲೆದ್ದಾಗ ಪ್ರಾಣಬೆದರಿಕೆಯಿಂದ ಓಡಿ ಬಂದವರೆಲ್ಲ ಮೊದಲ ಗುಂಪಿಗೆ ಸೇರಿದವರು. 

ಇದಕ್ಕೆ ಉತ್ತಮ ಉದಾಹರಣೆ `ಬಿಮಾರು` ಎಂಬ ಹಣೆಪಟ್ಟಿಹಚ್ಚಿಕೊಂಡಿರುವ ಬಿಹಾರ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಉತ್ತರಪ್ರದೇಶಗಳದ್ದು. ಭಾರತದಲ್ಲಿ ಈಗಲೂ ಅತಿಹೆಚ್ಚಿನ ಪ್ರಮಾಣದಲ್ಲಿ ವಲಸೆ ನಡೆಯುತ್ತಿರುವುದು ರಾಜ್ಯಗಳಿಂದ. ಬಿಹಾರ ಮತ್ತು ಉತ್ತರಪ್ರದೇಶ ರಾಜ್ಯಗಳು ಉಳಿದೆರಡು ರಾಜ್ಯಗಳಷ್ಟು ಬರಪೀಡಿತ ಅಲ್ಲದೆ ಇದ್ದರೂ ಅಲ್ಲಿ ಈಗಲೂ ಜೀವಂತವಾಗಿರುವ ಊಳಿಗಮಾನ್ಯ ವ್ಯವಸ್ಥೆಯಿಂದಾಗಿ ಸಮಾನವಾಗಿ ಭೂಮಿ ಹಂಚಿಕೆ ಆಗಿಲ್ಲ. 

ಶೇಕಡಾ 80ರಷ್ಟು ಜನರ ಕೈಯಲ್ಲಿ ಒಟ್ಟು ಭೂಮಿಯ ಶೇಕಡಾ 20ರಷ್ಟಿದ್ದರೆ, ಶೇಕಡಾ 20ರಷ್ಟು ಜನರ ಕೈಯಲ್ಲಿ ಒಟ್ಟುಭೂಮಿಯ ಶೇಕಡಾ 80ರಷ್ಟು ಭೂಮಿ ಇದೆ. ಮೊದಲು ಡಕಾಯಿತರು, ನಂತರದ ದಿನಗಳಲ್ಲಿ ಮಾವೋವಾದಿಗಳು ಹುಟ್ಟಿಕೊಂಡದ್ದಕ್ಕೆ ಇದೂ ಕಾರಣ.

 ಬಿಹಾರಿಗಳ ರೀತಿಯಲ್ಲಿಯೇ ಇತ್ತೀಚೆಗೆ ಹೆಚ್ಚು ಸಂಖ್ಯೆಯಲ್ಲಿ ವಲಸೆ ಹೋಗುತ್ತಿರುವವರು ಈಶಾನ್ಯ ರಾಜ್ಯದ ಜನರು. ದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕೊತ್ತಾಗಳಂತಹ ಮಹಾನಗರಗಳಲ್ಲಿ ಇವರ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಷ್ಟ್ರ ಮತ್ತು ರಾಜ್ಯಗಳನ್ನು ಆಳಿದವರ ನಿರಂತರ ರಾಜಕೀಯ ನಿರ್ಲಕ್ಷ, ಕರ್ತವ್ಯಲೋಪ ಮತ್ತು ಆಂತರಿಕವಾದ ಸಾಮಾಜಿಕ ಬಿಕ್ಕಟ್ಟಿನಿಂದಾಗಿ ಕಳೆದ ನಾಲ್ಕೈದು ದಶಕಗಳಿಂದ ಆ ರಾಜ್ಯಗಳಲ್ಲಿನ ಸಾಮಾನ್ಯ ಜನ ಅನೇಕ ಬಗೆಯ ಕಷ್ಟ-ನಷ್ಟಗಳಿಗೆ ಈಡಾಗುತ್ತಾ ಬಂದಿದ್ದಾರೆ.
 
ಕೇಂದ್ರ ಯೋಜನಾ ಆಯೋಗ ನಡೆಸಿರುವ ಸಾಮಾಜಿಕ-ಆರ್ಥಿಕ ಅಧ್ಯಯನಗಳು ಕೂಡಾ ಇದನ್ನೆ ಹೇಳುತ್ತಿವೆ. ಇದರ ಪ್ರಕಾರ  ಕಳೆದ 1996-97ರಿಂದ 2007-2008ರ ಅವಧಿಯ ಹತ್ತುವರ್ಷಗಳಲ್ಲಿ ಕೃಷಿ ಕ್ಷೇತ್ರದ ಸರಾಸರಿ ಅಭಿವೃದ್ಧಿ ದರ ಕರ್ನಾಟಕದಲ್ಲಿ ಶೇಕಡಾ 7.16, ಆಂಧ್ರ ಪ್ರದೇಶದಲ್ಲಿ ಶೇಕಡಾ 6.82 ಮತ್ತು ಗುಜರಾತ್‌ನಲ್ಲಿ ಶೇಕಡಾ 7.46 ಆಗಿದ್ದರೆ, ಅದು ಅಸ್ಸಾಂನಲ್ಲಿ ಶೇಕಡಾ 1.51, ಮಣಿಪುರದಲ್ಲಿ ಶೇಕಡಾ 1.31, ಅರುಣಾಚಲ ಪ್ರದೇಶದಲ್ಲಿ ಶೇಕಡಾ 4.49, ನಾಗಲ್ಯಾಂಡ್‌ನಲ್ಲಿ ಶೇಕಡಾ 4.92, ತ್ರಿಪುರದಲ್ಲಿ ಶೇಕಡಾ 3.74, ಮಿಜೋರಾಂನಲ್ಲಿ ಶೇಕಡಾ 2.85, ಮತ್ತು ಮೇಘಾಲಯದಲ್ಲಿ ಶೇಕಡಾ 5.06 ಆಗಿದೆ. ಈ ರಾಜ್ಯಗಳ ಜತೆ ಸೇರಿಸಬಹುದಾದ ಇನ್ನೊಂದು ರಾಜ್ಯ ಒರಿಸ್ಸಾ. 

ಹತ್ತು ವರ್ಷಗಳ ಅವಧಿಯಲ್ಲಿ ಆ ರಾಜ್ಯದ ಕೃಷಿಕ್ಷೇತ್ರದ ಅಭಿವೃದ್ಧಿ ದರ ಶೇಕಡಾ 2.93ರಲ್ಲಿಯೇ ಇದೆ. ಕೃಷಿಕ್ಷೇತ್ರದ ಜತೆಯಲ್ಲಿ ದುಡಿಯುವ ಕೈಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೀಡುವ ಕೈಗಾರಿಕಾ ಕ್ಷೇತ್ರದ ಸ್ಥಿತಿ ಭಿನ್ನವಾಗಿಲ್ಲ. 1997-98ರಿಂದ 2007-08ರ ಅವಧಿಯ ಹತ್ತು ವರ್ಷಗಳಲ್ಲಿ ಕೈಗಾರಿಕಾ ಕ್ಷೇತ್ರದ ಸರಾಸರಿ ಅಭಿವೃದ್ಧಿ ದರ ಕರ್ನಾಟಕದಲ್ಲಿ ಶೇಕಡಾ 8.36 ಮತ್ತು ಆಂಧ್ರಪ್ರದೇಶದಲ್ಲಿ ಶೇಕಡಾ 6.61 ಆಗಿದ್ದರೆ, ಇದು ಅಸ್ಸಾಂನಲ್ಲಿ ಶೇಕಡಾ 1.51, ಅರುಣಾಚಲಪ್ರದೇಶದಲ್ಲಿ ಶೇಕಡಾ 4.49, ಮಣಿಪುರದಲ್ಲಿ ಶೇಕಡಾ 1.31, 

ಮೇಘಾಲಯದಲ್ಲಿ ಶೇಕಡಾ 5.06, ಮಿಜೋರಾಂನಲ್ಲಿ ಶೇಕಡಾ 2.85, ನಾಗಲ್ಯಾಂಡ್‌ನಲ್ಲಿ ಶೇಕಡಾ 4.92 ಮತ್ತು ತ್ರಿಪುರದಲ್ಲಿ ಶೇಕಡಾ 3.74 ಆಗಿದೆ. ಬಡತನದ ರೇಖೆಗಿಂತ ಕೆಳಗಿರುವವರ ಪ್ರಮಾಣ ಕರ್ನಾಟಕದಲ್ಲಿ ಶೇಕಡಾ 23.6 ಮತ್ತು ಆಂಧ್ರಪ್ರದೇಶದಲ್ಲಿ ಶೇಕಡಾ 21.1 ಆಗಿದ್ದರೆ, ಮಣಿಪುರದಲ್ಲಿ ಶೇಕಡಾ 47.1,ಅಸ್ಸಾಂನಲ್ಲಿ ಶೇಕಡಾ 40, ಅರುಣಾಚಲ ಪ್ರದೇಶದಲ್ಲಿ ಶೇಕಡಾ 26 ಆಗಿದೆ. ಆರೋಗ್ಯ, ಕುಡಿಯುವ ನೀರಿನ ಪೂರೈಕೆ, ಮೂಲಸೌಕರ್ಯ ಇತ್ಯಾದಿ ಮಾನವ ಸಂಪನ್ಮೂಲ ಅಭಿವೃದ್ಧಿಯ ಇತರ 

ಸೂಚ್ಯಂಕಗಳಲ್ಲಿಯೂ ಈಶಾನ್ಯ ರಾಜ್ಯಗಳು ದಕ್ಷಿಣದ ರಾಜ್ಯಗಳಿಂದ ಹಿಂದೆ ಉಳಿದಿವೆ.
ಸಾಮಾನ್ಯ ಓದು-ಬರಹಗಳಿಗಷ್ಟೇ ಸೀಮಿತಗೊಳಿಸಿ ಲೆಕ್ಕಹಾಕುವ ಸಾಕ್ಷರತೆಯ ಪ್ರಮಾಣದಲ್ಲಿ ಮಾತ್ರ ಈಶಾನ್ಯರಾಜ್ಯಗಳ ಸಾಧನೆ ಇತರ ಹಲವಾರು ರಾಜ್ಯಗಳಿಗಿಂತ ಉತ್ತಮವಾಗಿದೆ. ಸಾಕ್ಷರರ ಪ್ರಮಾಣ ರಾಷ್ಟ್ರಮಟ್ಟದಲ್ಲಿ ಶೇಕಡಾ 74.4 ಮತ್ತು ಕರ್ನಾಟಕದಲ್ಲಿ ಶೇಕಡಾ 75.60 ಆಗಿದೆ. ಅಸ್ಸಾಂ (ಶೇಕಡಾ 73.18) ರಾಜ್ಯವೊಂದನ್ನು ಹೊರತುಪಡಿಸಿ ಮಣಿಪುರ ( ಶೇಕಡಾ 80) ಮಿಜೋರಾಂ (ಶೇಕಡಾ 91.58) 

ನಾಗಲ್ಯಾಂಡ್ (ಶೇಕಡಾ 80.4),ಮೇಘಾಲಯ (ಶೇಕಡಾ 75.58) ಮತ್ತು ತ್ರಿಪುರ (ಶೇಕಡಾ 87.75) ರಾಜ್ಯಗಳು ದಕ್ಷಿಣದ ಕೆಲವು ರಾಜ್ಯಗಳಿಗಿಂತಲೂ ಮುಂದೆ ಇವೆ. ಆದರೆ ಉನ್ನತ ಶಿಕ್ಷಣದ ಕ್ಷೇತ್ರಗಳಲ್ಲಿ ಈಶಾನ್ಯರಾಜ್ಯಗಳು ಹಿಂದೆ ಉಳಿದಿವೆ. ಇದರಿಂದಾಗಿ ಆ ರಾಜ್ಯಗಳಲ್ಲಿ ವೈದ್ಯರು, ಎಂಜಿನಿಯರ್‌ಗಳು, ವಿಜ್ಞಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲ. ಈ ಕಾರಣದಿಂದಾಗಿಯೇ ಉನ್ನತ ಶಿಕ್ಷಣವನ್ನರಸಿಕೊಂಡು ಆ ರಾಜ್ಯಗಳ ವಿದ್ಯಾರ್ಥಿಗಳು ದೆಹಲಿ, ಬೆಂಗಳೂರು, ಹೈದರಾಬಾದ್, ಪುಣೆಯಂತಹ ಮಹಾನಗರಗಳಿಗೆ ಬರುತ್ತಿದ್ದಾರೆ.

ಸಾಮಾನ್ಯವಾಗಿ ದೈಹಿಕ ಶ್ರಮದ ಉದ್ಯೋಗ ಮಾಡಲು ವಲಸೆ ಬರುವವರನ್ನು ಮಹಾನಗರಗಳು ತೆರೆದ ಬಾಹುಗಳಿಂದ ಸ್ವಾಗತಿಸುತ್ತವೆ. ನಗರವಾಸಿಗಳ ಚಾಕರಿ ಮಾಡಲು ಕೂಲಿಕಾರ್ಮಿಕರು ಬೇಕಾಗುತ್ತಾರೆ. ಈಗಲೂ ಬಿಹಾರ,ರಾಜಸ್ತಾನ, ಉತ್ತರಪ್ರದೇಶ, ಜಾರ್ಖಂಡ್ ಮೊದಲಾದ ರಾಜ್ಯಗಳಿಂದ ಬರುವ ಕೂಲಿಕಾರ್ಮಿಕರಿಲ್ಲದೆ ಹೋದರೆ ಮಹಾನಗರಗಳಲ್ಲಿನ ಕಟ್ಟಡ ನಿರ್ಮಾಣ ಕೆಲಸ ನಡೆಯಲಾರದು.
 
ವಲಸೆ ಸಮಸ್ಯೆ ಉಲ್ಬಣಗೊಂಡಿರುವುದು  ಆರ್ಥಿಕ ಉದಾರೀಕರಣದ ನಂತರದ ದಿನಗಳಲ್ಲಿ ಬಿಳಿಕಾಲರ್ ಉದ್ಯೋಗಗಳನ್ನು ಅರಸುತ್ತಾ  ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗತೊಡಗಿದಾಗ. ಮುಂಬೈ, ಕೊಲ್ಕೊತ್ತಾ, ದೆಹಲಿಗಳಿಗೆ ಸೀಮಿತವಾಗಿದ್ದ ಈ ಸಂಘರ್ಷ ಈಗ ಬೆಂಗಳೂರು ಮಹಾನಗರದಲ್ಲಿಯೂ ಕಾಣಿಸಿಕೊಂಡಿದೆ.
 
ಬಿಳಿ ಬಣ್ಣದ, ನೋಡಲು ವಿದೇಶಿಯರಂತೆ ಕಾಣುವ, ಇಂಗ್ಲಿಷ್ ಮಾತನಾಡಬಲ್ಲ ಈಶಾನ್ಯ ರಾಜ್ಯಗಳ ಯುವಕ-ಯುವತಿಯರು ಮಹಾನಗರಗಳ ಆತಿಥ್ಯ, ವೈದ್ಯಕೀಯ, ಪ್ರವಾಸೋದ್ಯಮ, ಸೌಂದರ್ಯವರ್ಧನೆ ಮೊದಲಾದ ಕ್ಷೇತ್ರಗಳ ಅವಶ್ಯಕತೆಗಳಿಗೆ ಹೇಳಿ ಮಾಡಿಸಿದಂತಿದ್ದಾರೆ.
 
ಉದ್ಯೋಗಾವಕಾಶ ಹೆಚ್ಚುತ್ತಿದ್ದಂತೆ ಆ ರಾಜ್ಯಗಳ ವಲಸೆಯ ಪ್ರಮಾಣ ಕೂಡಾ ಹೆಚ್ಚಾಗತೊಡಗಿದೆ. ಈಶಾನ್ಯರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಕೂಡಾ ವಲಸೆಹೋಗಲು ಜನರನ್ನು ದೂಡುತ್ತಿರುವ ಹಾಗೆ ಕಾಣುತ್ತಿದೆ. ಇಲ್ಲಿಯವರೆಗೆ ಪೊಲೀಸರು ನಡೆಸಿರುವ ತನಿಖೆಯ ಪ್ರಕಾರ ಕಳೆದ ವಾರ ಇಲ್ಲಿ ನಡೆದ ಘಟನೆಗಳಿಗೆ ವಲಸೆಯ ಸಮಸ್ಯೆ ನೇರವಾಗಿ ಕಾರಣ ಆಗಿರಲಾರದೆಂದು ಅನಿಸಿದರೂ ಎಚ್ಚರಿಕೆಯ ಗಂಟೆಗಳಂತಿರುವ ಇಂತಹ ಘಟನೆಗಳನ್ನು ನಿರ್ಲಕ್ಷಿಸಲಾಗದು.

ಭಾರತದ ಯಾವ ಮೂಲೆಯಲ್ಲಿಯಾದರೂ ಬದುಕುವ ಹಕ್ಕನ್ನು ಸಂವಿಧಾನ ನೀಡಿರುವುದು ನಿಜ. ಈ ಅಸ್ತ್ರವನ್ನೇ ಎತ್ತಿಕೊಂಡು ವಲಸೆಯನ್ನು ಸಮರ್ಥಿಸುವ ರೀತಿಯಲ್ಲಿಯೇ ಭಾಷಾವಾರು ಪ್ರಾಂತ್ಯ ರಚನೆಯ ಆಶಯವನ್ನು ಮುಂದಿಟ್ಟುಕೊಂಡು ವಲಸೆಯನ್ನು ಪ್ರಶ್ನಿಸಲು ಕೂಡಾ ಸಾಧ್ಯ. ಆದರೆ ಇಂತಹ ತರ್ಕ-ಕುತರ್ಕಗಳ ಮೂಲಕ ವಲಸೆಯಿಂದಾಗಿ ಹುಟ್ಟಿಕೊಳ್ಳುವ ನೂರಾರು ಬಗೆಯ ಸಂಘರ್ಷಗಳನ್ನು ತಡೆಯಲಿಕ್ಕಾಗದು. 

ವಲಸೆಯ ಮೂಲ ಕಾರಣ ರಾಜ್ಯಗಳ ಅಸಮಾನ ಅಭಿವೃದ್ಧಿಯಲ್ಲಿದೆ. ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಮತ್ತು ಅಭಿವೃದ್ಧಿಯ ಪ್ಯಾಕೇಜ್‌ಗಳನ್ನು ನೀಡಿದರಷ್ಟೇ ಸಾಲದು. ಆ ರಾಜ್ಯಗಳ ಆಡಳಿತ ಸೂತ್ರ ಹಿಡಿದವರು ಪ್ರಜೆಗಳ ಮೂಲಭೂತ 

ಅವಶ್ಯಕತೆಗಳನ್ನು ಮೂಲ ಸೌಕರ್ಯಗಳನ್ನು ಒದಗಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು, ಇಲ್ಲದೆ ಹೋದರೆ ಹಿಂದುಳಿದ ರಾಜ್ಯಗಳನ್ನು ಆಳುವವರು ಮಾಡಿದ ತಪ್ಪಿಗೆ ನಾವು ಯಾಕೆ ಬೆಲೆ ಕೊಡಬೇಕು ಎಂದು ಅಭಿವೃದ್ಧಿಹೊಂದುತ್ತಿರುವ ರಾಜ್ಯಗಳ ಜನರ ಪ್ರಶ್ನೆಗೆ ಉತ್ತರಿಸುವುದು ಕಷ್ಟವಾಗಬಹುದು. 

ವಲಸೆ ಎನ್ನುವುದು ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಿದೆ, ನಿರ್ಲಕ್ಷಿಸಿದರೆ ಅದು ಬೆಂಕಿಯಾಗಿ ಹೊತ್ತಿಕೊಳ್ಳುವ ಅಪಾಯ ಇದೆ.

ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ August 13, 2012


ಮಳೆ ನಿಂತರೂ ಒಂದಷ್ಟು ಹೊತ್ತು ಮಳೆಹನಿ ನಿಲ್ಲುವುದಿಲ್ಲ. ಅಣ್ಣಾ ತಂಡವನ್ನು ಬರ್ಖಾಸ್ತುಗೊಳಿಸಲಾಗಿದ್ದರೂ ಅದು ಪ್ರಾರಂಭಿಸಿದ್ದ ಚಳವಳಿ ಬಗ್ಗೆ ಚರ್ಚೆ-ವಿಶ್ಲೇಷಣೆಗಳು ನಿಂತಿಲ್ಲ, ಇದು ಇನ್ನಷ್ಟು ಕಾಲ ಮುಂದುವರಿಯಲಿದೆ.

ಮಿಂಚಿಮರೆಯಾಗಿ ಹೋದ ಈ ಚಳವಳಿಯ ಗರ್ಭಪಾತಕ್ಕೆ ಕಾರಣರಾದ ಖಳನಾಯಕರು ಯಾರು ಎನ್ನುವುದನ್ನು ಗುರುತಿಸುವ ಕೆಲಸ ಈಗ ಪ್ರಾರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಎಲ್ಲರೂ ಅಣ್ಣಾತಂಡದ ಪ್ರಮುಖ ಸದಸ್ಯರಾದ ಅರವಿಂದ್ ಕೇಜ್ರಿವಾಲ್, ಕಿರಣ್‌ಬೇಡಿ ಮತ್ತು ಪ್ರಶಾಂತ್ ಭೂಷಣ್ ಮೇಲೆ ಎರಗಿಬಿದ್ದಿದ್ದಾರೆ.

`ಸೃಷ್ಟಿ, ಪಾಲನೆ ಮತ್ತು ಲಯ`ದ ಮೂರೂ ಕೆಲಸಗಳನ್ನು ಈ ತ್ರಿಮೂರ್ತಿಗಳೇ ಮಾಡಿದ್ದು ಎಂದು ಅಣ್ಣಾಬೆಂಬಲಿಗರು ಆರೋಪಿಸತೊಡಗಿದ್ದಾರೆ. ಚಳವಳಿ ಹಾದಿ ತಪ್ಪಲು ಕಾರಣವಾದ ಇವರ ಪಾತ್ರ  ಕ್ಷಮಿಸಿ ಬಿಡುವಂತಹದ್ದು ಖಂಡಿತ ಅಲ್ಲ.

ಆದರೆ ಇವರಷ್ಟೇ ಖಳನಾಯಕರೇ? ಹಾಗೆಂದು ತೀರಾ ಸರಳವಾಗಿ ತೀರ್ಮಾನಿಸಿಬಿಟ್ಟರೆ ಈ ಚಳವಳಿಯ ಸೋಲು-ಗೆಲುವುಗಳನ್ನು ವಸ್ತುನಿಷ್ಠವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಾರದು.

ಈ ತ್ರಿಮೂರ್ತಿಗಳಷ್ಟೇ ಖಳರು ಅಲ್ಲದೆ ಇದ್ದರೆ ಬೇರೆ ಯಾರು ? ಕೆಲವರು ಅಣ್ಣಾಹಜಾರೆಯವರನ್ನೇ ಹೆಸರಿಸುತ್ತಾರೆ. ಸ್ವಲ್ಪ ಮಟ್ಟಿಗೆ ಇದು ನಿಜ ಕೂಡಾ. ಹಜಾರೆ ಅವರು ಸಜ್ಜನ, ಪ್ರಾಮಾಣಿಕ, ನಿಸ್ವಾರ್ಥಿ, ಸರಳಜೀವಿ ಎನ್ನುವುದರ ಬಗ್ಗೆ ಬಹಳ ಮಂದಿಗೆ ಅನುಮಾನ ಇಲ್ಲ.

ಆದರೆ ಈ ಗುಣಗಳಿಂದಷ್ಟೇ ನಾಯಕನಾಗಲು ಸಾಧ್ಯವೇ ಎನ್ನುವುದು ಪ್ರಶ್ನೆ. ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ನಂತರದಲ್ಲಿ ನಡೆದ ಎರಡು ಪ್ರಮುಖ ಚಳವಳಿಗಳನ್ನು ಮುನ್ನಡೆಸಿದ್ದ ಗಾಂಧೀಜಿ ಮತ್ತು ಜಯಪ್ರಕಾಶ್ ನಾರಾಯಣ್ ಕೇವಲ ಸಜ್ಜನರು ಮತ್ತು ಪ್ರಾಮಾಣಿಕರಾಗಿರಲಿಲ್ಲ.

ಅವರು ಬುದ್ದಿವಂತರೂ ಆಗಿದ್ದರು.  ವಿಸ್ತಾರವಾದ ಓದು, ರಾಷ್ಟ್ರ-ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಅರಿವು, ಪ್ರವಾಸ ಮತ್ತು ಜನರ ಜತೆಗಿನ ಒಡನಾಟ ಅವರಿಗೆ ಜನರ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳುವ ತೀಕ್ಷ್ಣಗ್ರಹಣಶಕ್ತಿಯನ್ನು ತಂದು ಕೊಟ್ಟಿತ್ತು.  ಒಂದು ಅನ್ನದ ಅಗುಳನ್ನು ಮುಟ್ಟಿಯೇ ಪಾತ್ರೆಯಲ್ಲಿದ್ದ ಅನ್ನ ಬೆಂದಿದೆಯೇ ಇಲ್ಲವೇ ಎನ್ನುವುದನ್ನು ಹೇಳುವಷ್ಟು ಸಮಾಜದ ನಾಡಿಮಿಡಿತವನ್ನ್ನು ಬಲ್ಲವರಾಗಿದ್ದರು.

ಜನಪ್ರಿಯತೆಯಲ್ಲಿ ತೇಲಿಹೋಗದೆ ಅದನ್ನು ತಮ್ಮ ಉದ್ದೇಶ ಸಾಧನೆಗೆ ಬಳಸಿಕೊಳ್ಳುವ ನಿರ್ವಹಣಾ ಶಕ್ತಿ ಮತ್ತು ಸಂಯಮ ಅವರಲ್ಲಿತ್ತು. ಜಾತಿ,ಧರ್ಮ,ಪ್ರದೇಶಗಳಲ್ಲಿ ಒಳಗಿಂದೊಳಗೆ ಒಡೆದುಹೋಗಿರುವ ದೇಶದಲ್ಲಿ ಒಂದು ಸಾಮೂಹಿಕ ಚಳವಳಿಯನ್ನು ಮುನ್ನಡೆಸಿಕೊಂಡು ಹೋಗಲು ಇಂತಹ ಸಾಮರ್ಥ್ಯಬೇಕಾಗುತ್ತದೆ. ಈ ಗುಣಗಳು ಅಣ್ಣಾಹಜಾರೆಯವರಲ್ಲಿ ಇದ್ದಿದ್ದರೆ ಭ್ರಷ್ಟಾಚಾರ ವಿರೋಧಿ ಚಳವಳಿ ನಡುಹಾದಿಯಲ್ಲಿಯೇ ಅಪಘಾತಕ್ಕೆ ಈಡಾಗುತ್ತಿರಲಿಲ್ಲ.

ಅಣ್ಣಾಚಳವಳಿ ಹಾದಿ ತಪ್ಪಲು ಮಾಧ್ಯಮರಂಗ ವಹಿಸಿದ ಖಳನಾಯಕನ ಪಾತ್ರವೇ ಕಾರಣ ಎನ್ನುವವರೂ ಇದ್ದಾರೆ. ಈ ಆರೋಪವನ್ನು ಮಾಡುವ ಅಣ್ಣಾತಂಡದ ಸದಸ್ಯರು ಮತ್ತು  ಬೆಂಬಲಿಗರು  ಕೊನೆದಿನಗಳಲ್ಲಿ ಮಾಧ್ಯಮಗಳ ನಿರ್ಲಕ್ಷ್ಯ ಮತ್ತು ಟೀಕೆಗಳನ್ನು ಉದಹರಿಸುತ್ತಿದ್ದಾರೆ.

ಇದು ಮಾಧ್ಯಮಗಳನ್ನು ಅರ್ಥಮಾಡಿಕೊಳ್ಳಲಾಗದ ಅವರ ಅಜ್ಞಾನವನ್ನಷ್ಟೇ ತೋರಿಸುತ್ತದೆ. ಕೊನೆದಿನಗಳ ನಿರ್ಲಕ್ಷ್ಯಗಿಂತಲೂ  ಅಣ್ಣಾಚಳವಳಿಗೆ ಹೆಚ್ಚು ಹಾನಿ ಉಂಟು ಮಾಡಿದ್ದು ಪ್ರಾರಂಭದ ದಿನಗಳ ಅತಿಪ್ರಚಾರ.

ಕಣ್ಣುಕಟ್ಟಿನ ಪ್ರಚಾರ ವೈಖರಿ ಮೂಲಕ ಉಪವಾಸ ಶಿಬಿರದ ಮುಂದೆ ಸೇರಿದ್ದ ಸಾವಿರ ಜನರನ್ನು  ಲಕ್ಷವಾಗಿ, ಲಕ್ಷ ಜನರನ್ನು ಕೋಟಿಯಾಗಿ ಮಾಧ್ಯಮಗಳು ಬಿಂಬಿಸಿದ್ದನ್ನು ನಿಜವೆಂದೇ ನಂಬಿದ ಅಣ್ಣಾತಂಡದ ಸದಸ್ಯರು ದೇಶದ 120 ಕೋಟಿ ಜನ ತಮ್ಮ ಬೆನ್ನಹಿಂದೆ ಇದ್ದಾರೆ ಎಂದು ಭ್ರಮಿಸಿಬಿಟ್ಟರು.
 
ಮೂರೂಹೊತ್ತು ಟಿವಿ ಪರದೆಗಳಲ್ಲಿ, ಪತ್ರಿಕೆಗಳ ಪುಟಗಳಲ್ಲಿ ಕಾಣಿಸುವ ತಮ್ಮ ಮುಖಗಳನ್ನು ಪ್ರೀತಿಸುತ್ತಾ ಆತ್ಮರತಿಗೆ ಜಾರಿಬಿಟ್ಟರು. ಮಾಧ್ಯಮರಂಗ ವಾಣಿಜ್ಯೀಕರಣಗೊಂಡ ಬದಲಾದ ಪರಿಸ್ಥಿತಿಯಲ್ಲಿ ಮುಖ್ಯವಾಗಿ ಟಿವಿ ಚಾನೆಲ್‌ಗಳು ಹುಟ್ಟು-ಸಾವುಗಳೆರಡನ್ನು ಸಂಭ್ರಮದಿಂದ ಆಚರಿಸುತ್ತದೆ.

ಈ ಭರದಲ್ಲಿ ಸರಿ-ತಪ್ಪು ಇಲ್ಲವೆ ಒಳ್ಳೆಯದು-ಕೆಟ್ಟದನ್ನು ಗುರುತಿಸುವ ನ್ಯಾಯಪ್ರಜ್ಞೆ ಜನಪ್ರಿಯತೆಯ ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುತ್ತದೆ. ಮಾಧ್ಯಮಗಳಿಂದ ಪ್ರಚಾರ ಬಯಸುವವರಿಗೆ ಇದನ್ನು ಅರ್ಥಮಾಡಿಕೊಳ್ಳುವ ಶಕ್ತಿ ಇಲ್ಲದೆ ಇದ್ದರೆ ಅಣ್ಣಾತಂಡಕ್ಕಾದ ಗತಿಯೇ ಆಗುತ್ತದೆ.

ಮಾಧ್ಯಮಗಳ ಪ್ರಚಾರದ ಊರುಗೋಲಿನ ಬಲದಿಂದ ಎದ್ದುನಿಂತದ್ದು, ಆ ಊರುಗೋಲನ್ನು ಕಿತ್ತುಕೊಂಡ ಕೂಡಲೇ ಕುಸಿದುಬೀಳುತ್ತದೆ. ಹಾಗೆಯೇ ಆಯಿತು.

ಇವರೆಲ್ಲರ ಬಗ್ಗೆ ಚರ್ಚಿಸುತ್ತಿರುವ ಸಂದರ್ಭದಲ್ಲಿ ಅಣ್ಣಾಚಳವಳಿಯ ವೈಫಲ್ಯದಲ್ಲಿ ಖಳನಾಯಕರ ಪಾತ್ರವಹಿಸಿದ್ದ ಬಹುಮುಖ್ಯವಾದ ಸಮುದಾಯವನ್ನು ಎಲ್ಲರೂ ಮರೆತುಬಿಟ್ಟಿದ್ದಾರೆ. ಅದು ಚಳವಳಿಗೆ ಸೇರುತ್ತಿದ್ದ ಜನ. ಜಯಪ್ರಕಾಶ್ ನಾರಾಯಣ್ ನೇತೃತ್ವದ `ಸಂಪೂರ್ಣ ಕ್ರಾಂತಿ`ಯ ನಂತರದ ದಿನಗಳಲ್ಲಿ ಒಂದು ಚಳವಳಿಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಜನ ಎಂದೂ ಭಾಗವಹಿಸಿರಲಿಲ್ಲ.

`ನಾನೇ ಅಣ್ಣಾ` ಎಂದು ತಲೆಪಟ್ಟಿ ಕಟ್ಟಿಕೊಂಡು, ಎದೆಮೇಲೆ ಬರೆಸಿಕೊಂಡು, ಹಗಲುಹೊತ್ತಿನಲ್ಲಿ ಘೋಷಣೆ ಕೂಗುತ್ತಾ, ರಾತ್ರಿಹೊತ್ತು ಕ್ಯಾಂಡಲ್ ಹಚ್ಚುತ್ತಾ ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಕ್ರೀಯಾಶೀಲರಾಗಿ `ಅರಬ್ ವಸಂತ` ಇನ್ನೇನು ಭಾರತದಲ್ಲಿ ಪ್ರಾರಂಭವಾಗಿಯೇ ಬಿಟ್ಟಿತೆನ್ನುವ ಭ್ರಮಾಲೋಕವನ್ನು ಸೃಷ್ಟಿಸುತ್ತಿದ್ದವರು ಚಳವಳಿಯಲ್ಲಿ ಭಾಗವಹಿಸಿದ್ದ ಜನ.

ಅಣ್ಣಾಹಜಾರೆ ಅವರ ಮೊದಲೆರಡು ಉಪವಾಸಗಳ ಕಾಲದಲ್ಲಿ ಸಕ್ರಿಯವಾಗಿದ್ದ ಈ ಜನಸಮೂಹ ನಂತರದ ಎರಡು ಉಪವಾಸಗಳ ಕಾಲಕ್ಕೆ ಆಸಕ್ತಿಯನ್ನು ಕಳೆದುಕೊಂಡುಬಿಟ್ಟಿತು.

ಹಿಂದಿನಷ್ಟು ಜನ ಸೇರುತ್ತಿಲ್ಲ ಎಂದು ಗೊತ್ತಾದ ಕೂಡಲೇ ಆಡಳಿತಾರೂಢ ಪಕ್ಷ ಚಳವಳಿಗಾರರನ್ನು ಕರೆಸಿ ಮಾತನಾಡಲು ಕೂಡಾ ಹೋಗದೆ ಸುಮ್ಮನಾಯಿತು, ಜನ ಕಡಿಮೆ ಸೇರುತ್ತಿದ್ದಾರೆ ಎಂದು ಗೊತ್ತಾದ ಕೂಡಲೇ ಮಾಧ್ಯಮಗಳು ಕೂಡಾ ಹಿಂದೆ ಸರಿದುಬಿಟ್ಟವು. ಅಣ್ಣಾತಂಡ ಯುದ್ಧಮುಗಿಯವ ಮೊದಲೇ ಶಸ್ತ್ರತ್ಯಾಗ ಮಾಡಲು ಮುಖ್ಯ ಕಾರಣ ತಮ್ಮ ಹಿಂದೆ ಲಕ್ಷಲಕ್ಷ ಸಂಖ್ಯೆಯಲ್ಲಿದ್ದೇವೆ ಎಂಬ ನಂಬಿಕೆ ಹುಟ್ಟಿಸಿದ್ದ ಜನ ದೂರವಾಗಿದ್ದು.

ಈ ಜನ ಹೀಗೆ ಯಾಕೆ ವರ್ತಿಸಿದರು ಎನ್ನುವುದನ್ನು ವಿಶ್ಲೇಷಿಸುವ ಮೊದಲು ಇವರು ಯಾರು ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ನಮ್ಮಲ್ಲಿ ನಡೆಯುವ ಚಳವಳಿಗಳನ್ನು ಒಂದು ನಿರ್ದಿಷ್ಟವಾದ ಆವರಣದೊಳಗೆ ಸೇರಿಸುವುದು ಕಷ್ಟವಾದರೂ ಸ್ಥೂಲವಾಗಿ ಇವುಗಳನ್ನು ರಾಜಕೀಯ ಮತ್ತು ರಾಜಕೀಯೇತರ  ಎಂದು ಗುರುತಿಸಬಹುದು.

ಈ ವ್ಯಾಖ್ಯಾನ ಕೂಡಾ ಚಳವಳಿಗಳ ಸ್ಪಷ್ಟ ಚಿತ್ರವನ್ನು ನೀಡುವುದಿಲ್ಲ. ರಾಜಕೀಯ ಉದ್ದೇಶದ ಚಳವಳಿಗಳ ಬಗ್ಗೆ ಯಾವುದೇ ಗೊಂದಲ ಇಲ್ಲ. ಉದಾಹರಣೆಗೆ ಕಾಂಗ್ರೆಸ್,ಬಿಜೆಪಿ, ಕಮ್ಯುನಿಸ್ಟ್ ಇತ್ಯಾದಿ ಪಕ್ಷಗಳು ನಡೆಸುವ ಚಳವಳಿಗಳು.

ಇಲ್ಲಿ ಎಲ್ಲವೂ ಪಾರದರ್ಶಕ. ಸಮಸ್ಯೆ ರಾಜಕೀಯೇತರ ಚಳವಳಿಗಳದ್ದು. ನಿರ್ದಿಷ್ಟವಾದ ರಾಜಕೀಯ ಸಿದ್ಧಾಂತವನ್ನು ಹೊಂದಿಯೂ ಚುನಾವಣಾ ರಾಜಕೀಯದಿಂದ ದೂರವಾಗಿರುವ ರಾಜಕೀಯೇತರ ಚಳವಳಿಗಳಿವೆ.

ಇದೇ ರೀತಿ  ರಾಜಕೀಯೇತರ ಚಳವಳಿಗಳಾಗಿ ಪ್ರಾರಂಭಗೊಂಡು ಕ್ರಮೇಣ ನೇರ ಚುನಾವಣೆಯಲ್ಲಿ ಪಾಲ್ಗೊಂಡ ಚಳವಳಿಗಳೂ ಇವೆ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕವೂ ಸೇರಿದಂತೆ ದೇಶದ ಬೇರೆಬೇರೆ ಭಾಗಗಳಲ್ಲಿನ ರೈತ ಮತ್ತು ದಲಿತ ಚಳವಳಿಗಳು. ರಾಜಕೀಯ ಚಳವಳಿಗಳಲ್ಲಿ ಭಾಗವಹಿಸಿದವರು ಒಂದು ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿರುವವರು.

ರಾಜಕೀಯೇತರ ಚಳವಳಿಗೆ ವಿಶಾಲವಾದ ಹರಹು ಇರುತ್ತದೆ. ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಇಲ್ಲವೆ ಭೂಮಿ ಕಳೆದುಕೊಂಡವರು, ಮನೆ ಕಳೆದುಕೊಂಡವರು,ಅನ್ಯಾಯಕ್ಕೀಡಾದವರು...

ಹೀಗೆ ಬೇರೆಬೇರೆ ಜನವರ್ಗವನ್ನು ನಿರ್ದಿಷ್ಟವಾಗಿ ಗುರಿಯಾಗಿಟ್ಟುಕೊಂಡು ಈ ಚಳವಳಿಗಳು ನಡೆಯುತ್ತಿರುತ್ತವೆ. ಈ ಎರಡೂ ಬಗೆಯ ಚಳವಳಿಗಳಿಗೆ ಸ್ಪಷ್ಟವಾದ ಐಡೆಂಟಿಟಿ ಇರುತ್ತದೆ. ಇದರಿಂದಾಗಿ ಚಳವಳಿಯ ನಾಯಕರಿಗೆ ಕೂಡಾ ತಮ್ಮ ಉದ್ದೇಶ ಮತ್ತು ಸಾಗುವ ದಾರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ.

 ಆದರೆ ಬಹಳ ದೊಡ್ಡ ಕ್ಯಾನ್‌ವಾಸ್ ಇಟ್ಟುಕೊಂಡು ಪ್ರಾರಂಭವಾದ ಅಣ್ಣಾಚಳವಳಿಗೆ ಒಂದು ನಿರ್ದಿಷ್ಟ ಐಡೆಂಟಿಟಿ ಇರಲಿಲ್ಲ. ಇದು ಈ ಚಳವಳಿಯ ಶಕ್ತಿಯೂ ಹೌದು, ದೌರ್ಬಲ್ಯ ಕೂಡಾ. ಯಾವುದೇ ರಾಜಕೀಯ ಪಕ್ಷದ ಜತೆಗೆ ಗುರುತಿಸಿಕೊಳ್ಳದವರು ಮಾತ್ರವಲ್ಲ, ಗುರುತಿಸಿಕೊಂಡವರು ಕೂಡಾ ಎದೆಮೇಲಿದ್ದ ಪಕ್ಷದ ಬ್ಯಾಡ್ಜ್‌ಗಳನ್ನು ಕಿಸೆಯಲ್ಲಿಟ್ಟುಕೊಂಡು ಅಣ್ಣಾಬ್ಯಾಡ್ಜ್ ಧರಿಸಿ ಉಪವಾಸ ಕೂತಿದ್ದರು.

ಭ್ರಷ್ಟಾಚಾರ ಎನ್ನುವುದು ಈ ದೇಶದ ಬಡವನಿಂದ ಹಿಡಿದು ಶ್ರಿಮಂತರವರೆಗೆ, ಅಶಿಕ್ಷಿತರಿಂದ ಹಿಡಿದು ಶಿಕ್ಷಿತರವರೆಗೆ ಎಲ್ಲರನ್ನೂ ಆವರಿಸಿರುವ ಸಮಸ್ಯೆಯಾಗಿರುವ ಕಾರಣ ನಮ್ಮ ಗುರಿ ದೇಶದ 120 ಕೋಟಿ ಜನ ಎಂದು ಅಣ್ಣಾತಂಡ ತಿಳಿದುಕೊಂಡುಬಿಟ್ಟಿತು.

ತಂಡದ ಸದಸ್ಯರು ಎಲ್ಲರನ್ನೂ ಬನ್ನಿಬನ್ನಿ ಎಂದು ಕೈಬೀಸಿ ಕರೆಯಲಾರಂಭಿಸಿದರು. ಹೀಗೆ ಬಂದವರಲ್ಲಿ ಬಹುಸಂಖ್ಯಾತರು ಮಧ್ಯಮವರ್ಗಕ್ಕೆ ಸೇರಿರುವ ನಗರ ಕೇಂದ್ರಿತ, ಉದ್ಯೋಗಸ್ಥ, ಸದಾ ಸುರಕ್ಷತೆಯ ಕಕ್ಷೆಯೊಳಗೆ ಇರಬೇಕೆಂದು ಬಯಸುವ ಮತ್ತು ಯಾವುದೇ ಚಳವಳಿಯಲ್ಲಿ ಭಾಗವವಹಿಸಿ ಕಷ್ಟ-ನಷ್ಟ ಅನುಭವಿಸದವರು.

ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಹುಟ್ಟಿದ ಮತ್ತು ಆರ್ಥಿಕ ಉದಾರೀಕರಣದ ಯುಗದಲ್ಲಿ ಕಣ್ಣುಬಿಟ್ಟ 25-35 ವಯಸ್ಸಿನ ಆಜುಬಾಜಿನ ಈ ಯುವವರ್ಗ  ಲಾಭ-ನಷ್ಟದ ಲೆಕ್ಕಾಚಾರ ಇಟ್ಟುಕೊಂಡೇ ಮುಂದೆ ಹೆಜ್ಜೆ ಇಡುವವರು. `ಸೋಡಾಗ್ಯಾಸ್` ರೀತಿ ಒಮ್ಮೆಲೇ ಚಿಮ್ಮಿದ ಈ `ಯುವಬೆಂಬಲ`ವನ್ನು ಅಣ್ಣಾತಂಡ ನಂಬಿತು.ನಂಬಿಕೆ ಕೈಕೊಟ್ಟಿತು.

 ಈ ಮಧ್ಯಮ ವರ್ಗ ಭಾರತದಲ್ಲಿ ಮಾತ್ರವಲ್ಲ ಪ್ರಪಂಚದ ಯಾವುದೇ ದೇಶದಲ್ಲಿ ರಾಜಕೀಯ ಇಲ್ಲವೆ ಸಾಮಾಜಿಕ ಬದಲಾವಣೆಯಲ್ಲಿ ಭಾಗವಹಿಸಿಲ್ಲ. ಇದನ್ನು ಹೇಳಿದಾಗ ಕೆಲವರು ಅರಬ್‌ರಾಷ್ಟ್ರಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಉದಾಹರಣೆ ಕೊಡಬಹುದು. ಅಲ್ಲಿನ ಮಧ್ಯಮವರ್ಗದಿಂದಲೇ ಚಳವಳಿ ಪ್ರಾರಂಭವಾದರೂ ಅದು ಅನ್ಯಾಯಕ್ಕೀಡಾದ ಎಲ್ಲ ವರ್ಗಗಳನ್ನು ಜತೆಯಲ್ಲಿ ಕಟ್ಟಿಕೊಂಡು ಬೆಳೆಯುತ್ತಾಹೋಯಿತು.

ಆ ದೇಶಗಳಲ್ಲಿ ಸರ್ವಾಧಿಕಾರದಿಂದ ನಲುಗಿಹೋದ ಸಾಮಾನ್ಯ ಜನ ಅದರಲ್ಲಿ ಭಾಗವಹಿಸಿದ್ದರು. ಪ್ರಾಣವೊಂದನ್ನು ಬಿಟ್ಟು ಕಳೆದುಕೊಳ್ಳಲು ಬೇರೆ ಏನೂ ಇಲ್ಲದವರು ಅವರು. ಇಲ್ಲಿ ಹಾಗಾಗಲಿಲ್ಲ. ಅಣ್ಣಾಚಳವಳಿ ಎತ್ತಿದ ಭ್ರಷ್ಟಾಚಾರದ ವಿಷಯ ಎಲ್ಲರಿಗೆ ಸಂಬಂಧಿಸಿದ್ದೇ ಆಗಿದ್ದರೂ ಅದರ ತೀವ್ರತೆಯ ಅನುಭವ ಬೇರೆಬೇರೆ ವರ್ಗದ ಜನರಿಗೆ ಬೇರೆಬೇರೆ ರೀತಿಯದಾಗಿದೆ.

ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎನ್ನುವ ರೈತ, ಹೆಚ್ಚು ಸಂಬಳ ಸಿಗುತ್ತಿಲ್ಲ ಎನ್ನುವ ಕಾರ್ಮಿಕ, ಲಿಂಗತಾರತಮ್ಯ  ನಡೆಯುತ್ತಿದೆ ಎನ್ನುವ ಮಹಿಳೆ, ಜಾತಿತಾರತಮ್ಯದಿಂದಾಗಿ ದೌರ್ಜನ್ಯ ನಡೆಯುತ್ತಿದೆ ಎನ್ನುವ ದಲಿತರು, ಉದ್ಯೋಗ ಸಿಗುತ್ತಿಲ್ಲ ಎನ್ನುವ ಯುವಕರು..ಹೀಗೆ ಸಮಸ್ಯೆಗಳು ಹತ್ತಾರು.

ಇವರ ಕಷ್ಟಗಳ ಪಟ್ಟಿಯಲ್ಲಿ ಭ್ರಷ್ಟಾಚಾರ  ಇದ್ದರೂ ಅದು ಮೊದಲ ಸ್ಥಾನದಲ್ಲಿ ಇಲ್ಲ. ಭ್ರಷ್ಟಾಚಾರ ನಿರ್ಮೂಲನೆ ಇವರ ಕಷ್ಟಪರಿಹಾರಕ್ಕೆ ನೆರವಾಗಲೂಬಹುದು. ಆದರೆ ಇದನ್ನು ಯಾರೂ ಅವರಿಗೆ ಮನವರಿಕೆ ಮಾಡಿಕೊಟ್ಟಿಲ್ಲ.

ಆದುದರಿಂದ ಅವರಲ್ಲಿ ಹೆಚ್ಚಿನ ಮಂದಿ ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ದೂರವೇ ಉಳಿದುಬಿಟ್ಟರು. ಅವರನ್ನು ಹತ್ತಿರಕ್ಕೆ ಕರೆದುಕೊಂಡು ಬರುವ ಪ್ರಯತ್ನವನ್ನೂ ಯಾರೂ ಮಾಡಲಿಲ್ಲ. ಈ ಕಾರಣದಿಂದಾಗಿಯೇ ಜನಲೋಕಪಾಲರ ನೇಮಕಕ್ಕಾಗಿ ನಡೆದ ಹೋರಾಟ ನಿಜವಾದ ಅರ್ಥದಲ್ಲಿ ಜನಚಳವಳಿ ಆಗಲೇ ಇಲ್ಲ.

ಅಣ್ಣಾಚಳವಳಿ ವಿಫಲಗೊಂಡ ಮಾತ್ರಕ್ಕೆ ಮುಂದಿನ ಎಲ್ಲ ದಾರಿಗಳು ಮುಚ್ಚಿಹೋಗಿವೆ ಎಂದರ್ಥ ಅಲ್ಲ. ರಾಷ್ಟ್ರೀಯ ಪಕ್ಷಗಳು ನಿಧಾನವಾಗಿ ಮರೆಗೆ ಸರಿದು ಪ್ರಾದೇಶಿಕ ಪಕ್ಷಗಳು ವಿಜೃಂಭಿಸುತ್ತಿರುವ ಈಗಿನ ರಾಜಕಾರಣದಿಂದಲೂ ಚಳವಳಿಗಾರರೂ ಕಲಿಯಬೇಕಾದ ಪಾಠ ಇದೆ.

ಬಹುಶಃ ರಾಷ್ಟ್ರಮಟ್ಟದ ಒಂದು ಚಳವಳಿಯನ್ನು ಇನ್ನುಮುಂದೆ ನಡೆಸಿಕೊಂಡು ಹೋಗುವುದು ಸಾಧ್ಯ ಇಲ್ಲವೇನೋ? ಇದರಿಂದ ನಿರಾಶರಾಗಬೇಕಾಗಿಲ್ಲ, ಈಗಲೂ ದೇಶದ ನಾನಾಭಾಗಗಳಲ್ಲಿ ನೀರು,ಭೂಮಿ, ಉದ್ಯೊಗ, ಶಿಕ್ಷಣ,ಆರೋಗ್ಯ,ಆತ್ಮಗೌರವ...ಹೀಗೆ ನಾನಾ ಉದ್ದೇಶದ ಚಳವಳಿಗಳು ತಮ್ಮ ಮಿತಿಯಲ್ಲಿ ನಡೆಯುತ್ತಿರುತ್ತವೆ.

ಪ್ರಜಾಪ್ರಭುತ್ವವನ್ನು ಜೀವಂತವಾಗಿ ಮತ್ತು ಆರೋಗ್ಯಪೂರ್ಣವಾಗಿ ಇಟ್ಟಿರುವ ಈ ಸಣ್ಣಸಣ್ಣ ಚಳವಳಿಗಳೇ ಭವಿಷ್ಯದ ಭರವಸೆಗಳು. ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ.

Monday, August 6, 2012

ರಾಜಕೀಯದ ಬೋನಿಗೆ ಬಿದ್ದ `ಚಳವಳಿ ಹುಲಿ' August 06, 2012

ನಮ್ಮ ನಡುವಿನ ಭ್ರಷ್ಟರಾಜಕಾರಣಿಗಳಿಗೆ ಹೋಲಿಸಿದರೆ ಅಣ್ಣಾ ತಂಡದ ಸದಸ್ಯರು ಪ್ರಾಮಾಣಿಕರು ಮತ್ತು ಯೋಗ್ಯರು. ಅವರ ಮೇಲೆ ಕೆಲವು ಆರೋಪಗಳು ಇವೆ, ನಿಜ. ಇವೆಲ್ಲವೂ ಈ ದೇಶದ ಬಹುಸಂಖ್ಯಾತ ಪ್ರಜೆಗಳು ಒಂದಲ್ಲ ಒಂದು ಸಂದರ್ಭದಲ್ಲಿ ಬಲಿಯಾಗುವ ಸಾಮಾನ್ಯ ದೌರ್ಬಲ್ಯಗಳು. 

ಇವೆಲ್ಲದರ ಹೊರತಾಗಿಯೂ ಅಣ್ಣಾ ಹಜಾರೆ ರಾಜಕೀಯ ಪಕ್ಷ ಕಟ್ಟಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಬಹುಮತಕ್ಕೆ ಬೇಕಾಗಿರುವ 272  ಪ್ರಾಮಾಣಿಕ ಸದಸ್ಯರನ್ನು ಗೆಲ್ಲಿಸಿ ಕೇಂದ್ರದಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ರಚಿಸಲು ಸಾಧ್ಯವಾದರೆ...ಅದಕ್ಕಿಂತ ದೊಡ್ಡ ಭಾಗ್ಯ ಭಾರತೀಯರಿಗೆ ಇನ್ನೇನು ಬೇಕು? ಆದರೆ ಇದು ಸಾಧ್ಯವೇ ಎನ್ನುವುದಷ್ಟೇ ಪ್ರಶ್ನೆ.

ಹುಲಿಯಾಗಿರಲಿ, ಇಲಿಯಾಗಿರಲಿ ಯಾವುದೂ ಕೂಡಾ ತನ್ನನ್ನು ಹಿಡಿಯಲಿಕ್ಕಾಗಿಯೇ ಬೋನು ಇಟ್ಟಿದ್ದಾರೆ ಎಂದು ಗೊತ್ತಿದ್ದೂ ಅದರಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ಕ್ಷಿಪ್ರ ಅವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧದ ಜಾಗೃತಿ ಮೂಲಕ ದೇಶದಲ್ಲಿ ಸಂಚಲನ ಉಂಟುಮಾಡಿದ್ದ ಅಣ್ಣಾ ಚಳವಳಿ ಎಂಬ `ಹುಲಿ`ಯನ್ನು ರಾಜಕೀಯದ ಬೋನಿಗೆ ಹಾಕಲು ಯುಪಿಎ ಸರ್ಕಾರ ಒಂದು ವರ್ಷದಿಂದ ಸತತವಾಗಿ ಪ್ರಯತ್ನ ಮಾಡುತ್ತಿತ್ತು. 

ಇದಕ್ಕಾಗಿ `ರಾಜಕೀಯಕ್ಕೆ ಇಳಿದು ನೋಡಿ`, `ಚುನಾವಣೆಯಲ್ಲಿ ಸ್ಪರ್ಧಿಸಿ ನೋಡಿ` ಎಂದು ಕೇಂದ್ರ ಸಚಿವರು ಅಣ್ಣಾತಂಡವನ್ನು ಕೆಣಕುತ್ತಲೇ ಇದ್ದರು. ಇದರಿಂದ ಪ್ರಚೋದನೆಗೊಳಗಾದವರಂತೆ ಅಣ್ಣಾತಂಡದ ಕೆಲವು ಸದಸ್ಯರು ಹಿಸ್ಸಾರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಿ, ಹೆಚ್ಚುಕಡಿಮೆ ಬೋನಿನ ಹತ್ತಿರಹೋಗಿ ಒಳಗೆ ಬೀಳದೆ ತಪ್ಪಿಸಿಕೊಂಡಿದ್ದರು. 

ಈಗ `ಚಳವಳಿಯ ಹುಲಿ` ಬೋನಿಗೆ ಬಿದ್ದಿದೆ. ಇದರಿಂದ ಆಡಳಿತಾರೂಢ ಯುಪಿಎಗೆ ಮಾತ್ರವಲ್ಲ, ಬಹಿರಂಗವಾಗಿ ಅಣ್ಣಾ ಚಳವಳಿಯನ್ನು ಬೆಂಬಲಿಸುತ್ತಾ, ಆಂತರ್ಯದಲ್ಲಿ ಅದನ್ನು ದ್ವೇಷಿಸುತ್ತಾ ಇದ್ದ ವಿರೋಧಪಕ್ಷಗಳಿಗೂ ಖುಷಿಯಾಗಿದೆ. ಬೋನಿನಲ್ಲಿ ಬಿದ್ದಿರುವುದು ಗೊತ್ತಿಲ್ಲದಂತೆ `ಚಳವಳಿಯ ಹುಲಿ` ಮಾತ್ರ `ಭ್ರಷ್ಟ ರಾಜಕಾರಣಿಗಳ ಎದೆ ಸೀಳುತ್ತೇನೆ` ಎಂದು ಆರ್ಭಟಿಸುತ್ತಿದೆ. 

ಬೋನಿಗೆ ಬಿದ್ದಿರುವ ಹುಲಿಗೆ ಯಾರು ಹೆದರುತ್ತಾರೆ? ರಾಜಕೀಯವನ್ನು `ಫಟಿಂಗರ ಕೊನೆಯ ತಾಣ` ಎಂದು ಹೇಳುತ್ತಾ ಬಂದಿರುವ ಅಣ್ಣಾ ತಂಡ ಈಗ ಅದೇ ತಾಣವನ್ನು ಅರಸಿಕೊಂಡು ಬಂದ ಹಾಗಾಗಿದೆ. ಇನ್ನು ಮುಂದೆ ಅವರು `ಫಟಿಂಗರ` ಸಮಕ್ಕೆ ನಿಂತು ಸೆಣಸಾಡಬೇಕಾಗಿದೆ.

ರಾಜಕೀಯ ಪಕ್ಷವಾಗಿ ನೋಂದಣಿ ಮಾಡಿಕೊಂಡ ದಿನದಿಂದಲೇ ಅಣ್ಣಾ ತಂಡ ತನ್ನ ಮೊದಲ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಅಣ್ಣಾತಂಡ ದೇಶದ ಜನತೆಯ ಕಣ್ಣಮುಂದೆ ಮೂಡಿಸಿರುವ `ಆದರ್ಶ ಸ್ವರೂಪಿ ರಾಜಕೀಯ ಪಕ್ಷ`ವನ್ನು ನಿರ್ವಹಿಸಲು ನಿಸ್ವಾರ್ಥ, ಪ್ರಾಮಾಣಿಕ ಮತ್ತು ಸೇವಾನಿಷ್ಠ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಬೇಕಾಗುತ್ತಾರೆ. 

ಈ ಕೆಲಸಕ್ಕಾಗಿ ಅಣ್ಣಾ ಹಜಾರೆಯವರ ರೀತಿಯಲ್ಲಿಯೇ ಚುನಾವಣೆಯಲ್ಲಿ ಸ್ಪರ್ಧಿಸದೆ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಎಷ್ಟು ಮಂದಿ ಮುಂದೆ ಬರಬಹುದು? ದೇಶಪ್ರೇಮ ಸಾಬೀತುಪಡಿಸಲು ವಾರಾಂತ್ಯದ ರಜೆಯ ಕಾಲದಲ್ಲಿ ಉಪವಾಸ ಸತ್ಯಾಗ್ರಹದ ಶಿಬಿರಕ್ಕೆ ಬಂದು ಜೈಕಾರ ಹಾಕಿದರೆ ಸಾಕು ಎಂದು ತಿಳಿದುಕೊಂಡವರು ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟು `ದೇಶಸೇವೆ`ಗೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆಯೇ? ರಾಜಕೀಯ ಪಕ್ಷವೆಂದರೆ ಹನ್ನೊಂದು ಮಂದಿಯ ಕ್ರಿಕೆಟ್ ತಂಡ ಅಲ್ಲ, ಬೀದಿಯಲ್ಲಿದ್ದವರೆನ್ನೆಲ್ಲ ಸೇರಿಸಿಕೊಳ್ಳುವ ಗಣೇಶೋತ್ಸವ ಸಮಿತಿಯೂ ಅಲ್ಲ. 

ಅದರಲ್ಲಿ ಎಲ್ಲ ಜಾತಿ, ಧರ್ಮ, ವರ್ಗ ಮತ್ತು ಪ್ರದೇಶಗಳಿಗೆ ಪ್ರಾತಿನಿಧ್ಯ ಇರಬೇಕಾಗುತ್ತದೆ. ಪ್ರಾತಿನಿಧ್ಯ ಎಂದರೆ ಮೀಸಲಾತಿ ಅಲ್ಲ, ಅದು ಸಮಾನ ಅವಕಾಶ. ಇಂತಹ ಪ್ರಾತಿನಿಧ್ಯ ಅಣ್ಣಾತಂಡದಲ್ಲಿ ಇಲ್ಲ ಎನ್ನುವುದು ಕೂಡಾ ಅದರ ವಿರುದ್ಧದ ಒಂದು ಆರೋಪ.

ಅಣ್ಣಾತಂಡದ ಎರಡನೆಯ ಪರೀಕ್ಷೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಎದುರಾಗಲಿದೆ. ಸಂಸತ್‌ನೊಳಗೆ ಕಾಲಿಡುವ ಸದಸ್ಯರ ಅರ್ಹತೆ ಮತ್ತು ಪ್ರಾಮಾಣಿಕತೆ ಬಗ್ಗೆ ಅಣ್ಣಾ ತಂಡ ಕಳೆದ ಒಂದು ವರ್ಷದ ಅವಧಿಯಲ್ಲಿ  ಸಾರ್ವಜನಿಕ ವೇದಿಕೆ ಮತ್ತು ಟಿವಿ ಸ್ಟುಡಿಯೋಗಳಲ್ಲಿ ಗಂಟೆಗಟ್ಟಲೆ ಭಾಷಣ ಬಿಗಿದಿದೆ. 

ಆಡಿದ್ದನ್ನು ಮಾಡಿತೋರಿಸಬೇಕಾದರೆ ಅವರು ಈಗ `22 ಕ್ಯಾರೆಟ್` ಶುದ್ಧದ 543 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಣ್ಣಾಹಜಾರೆ ಅವರಿಗೆ ಚಳವಳಿ ಕಾಲದಲ್ಲಿ ತನ್ನ ಅಕ್ಕಪಕ್ಕದಲ್ಲಿ ನಿಲ್ಲಿಸಿಕೊಳ್ಳಲು ಸರಿಯಾಗಿ ನಾಲ್ಕು ಪ್ರಾಮಾಣಿಕ ಕಾರ್ಯಕರ್ತರು ಸಿಕ್ಕಿಲ್ಲ.
 
ಈಗ ಇದ್ದವರ ಮೇಲೆಯೂ ಆರೋಪಗಳಿರುವಾಗ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎಲ್ಲಿಂದ ತರುತ್ತೀರಿ? ಅಂತಹವರನ್ನು ಸೃಷ್ಟಿ ಮಾಡಲು ಅಣ್ಣಾಹಜಾರೆ `ಬ್ರಹ್ಮ`ನೂ ಅಲ್ಲ, ಹೊರಗಿನಿಂದ ಆಮದು ಮಾಡಿಕೊಳ್ಳಲು ಅವರು ಸರಕೂ ಅಲ್ಲ. ಅಣ್ಣಾತಂಡ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಯ ಮಟ್ಟವನ್ನು ಹಿಮಾಲಯದ ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿರುವ ಕಾರಣ, ನಾಳೆ  ಮಾಧ್ಯಮದವರು ಸೇರಿದಂತೆ ಸಾರ್ವಜನಿಕರು ದುರ್ಬೀನು ಹಿಡಿದುಕೊಂಡು ಅಣ್ಣಾ ಪಕ್ಷದವರ ಜಾತಕ ಜಾಲಾಡಿಸುತ್ತಾರೆ.

ಮೂರನೆಯ ಪರೀಕ್ಷೆಯನ್ನು ಚುನಾವಣೆಯ ಖರ್ಚಿಗೆ ದುಡ್ಡು ಹೊಂದಿಸಿಕೊಳ್ಳಬೇಕಾದ ಸಂದರ್ಭದಲ್ಲಿ ಅಣ್ಣಾತಂಡ ಎದುರಿಸಬೇಕಾಗುತ್ತದೆ.  ಆಯೋಗದ ನಿಯಮದ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿ 25 ಲಕ್ಷ ರೂಪಾಯಿ ಮತ್ತು ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿ 10 ಲಕ್ಷ ರೂಪಾಯಿಗಿಂತ ಹೆಚ್ಚು ಹಣ ಖರ್ಚು ಮಾಡುವ ಹಾಗಿಲ್ಲ. 

ಕಳೆದ 25 ವರ್ಷಗಳಲ್ಲಿ ಯಾವುದಾದರೂ ಅಭ್ಯರ್ಥಿ ಈ ಮಿತಿಯೊಳಗೆ ಹಣ ಖರ್ಚು ಮಾಡಿ ಗೆದ್ದ ಉದಾಹರಣೆಗಳು ಇವೆಯೇ? ಕ್ರೂರ ವಾಸ್ತವವನ್ನು ಒಪ್ಪಿಕೊಂಡು ಅಣ್ಣಾಪಕ್ಷದ ಅಭ್ಯರ್ಥಿಗಳು  ಆಯೋಗ ವಿಧಿಸಿರುವ ಮಿತಿಯನ್ನು ಮೀರಿ ಖರ್ಚು ಮಾಡಿದರೆ ಈಗ ಭ್ರಷ್ಟಾಚಾರದ ಕೆಸರಲ್ಲಿ ಮುಳುಗಿರುವ ರಾಜಕಾರಣಿಗಳಿಗೂ ಇವರಿಗೂ ಏನು ವ್ಯತ್ಯಾಸ ಉಳಿಯಲಿದೆ? 

ನಾಲ್ಕನೆಯ ಪರೀಕ್ಷೆ ಎದುರಾಗಲಿರುವುದು ರಾಜಕೀಯ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಸಂದರ್ಭದಲ್ಲಿ. ಇಲ್ಲಿಯವರೆಗೆ ಅಣ್ಣಾತಂಡದ ಏಕೈಕ ಕಾರ್ಯಕ್ರಮ- ಜನಲೋಕಪಾಲರ ನೇಮಕ. ಇದರ ಜತೆಯಲ್ಲಿ ಇತ್ತೀಚೆಗೆ ಕೇಂದ್ರದ 14 ಸಚಿವರ ವಿರುದ್ಧ ತನಿಖೆ ನಡೆಯಬೇಕೆಂಬ ಇನ್ನೊಂದು ಬೇಡಿಕೆ ಸೇರಿಸಿಕೊಂಡಿದೆ. 

ಇವೆರಡನ್ನು ಬಿಟ್ಟರೆ ಚುನಾವಣಾ ಸುಧಾರಣೆ, ಭೂಸ್ವಾಧೀನ ಕಾಯಿದೆಯಲ್ಲಿ ಬದಲಾವಣೆ ಮೊದಲಾದ ವಿಷಯಗಳು ಆಗಾಗ ಭಾಷಣಗಳಲ್ಲಿ ಪ್ರಸ್ತಾಪವಾಗುತ್ತಿದ್ದವು ಅಷ್ಟೆ. ಜನಲೋಕಪಾಲರ ನೇಮಕದ ಒಂದು ಕಾರ್ಯಸೂಚಿಯನ್ನು ಇಟ್ಟುಕೊಂಡು ರಾಜಕೀಯ ಪಕ್ಷವನ್ನು ಕಟ್ಟಲಾಗುವುದಿಲ್ಲ.
 
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ, ಅಸ್ಸಾಂನಿಂದ ಮಹಾರಾಷ್ಟ್ರದ ವರೆಗೆ ನೂರಾರು ಸಮಸ್ಯೆಗಳಿವೆ. ಅವುಗಳೆಲ್ಲವೂ ಕಾನೂನಿನ ಮೂಲಕವೇ ಇತ್ಯರ್ಥಗೊಳ್ಳುವಂತಹದ್ದಲ್ಲ, ಅವುಗಳಲ್ಲಿ ಕೆಲವು ಬಿಕ್ಕಟ್ಟುಗಳ ಬಗ್ಗೆ  ಸೈದ್ಧಾಂತಿಕ ನಿಲುವು ಮುಖ್ಯವಾಗುತ್ತದೆ.

ಮೀಸಲಾತಿ, ಮಾವೋವಾದಿ ಚಟುವಟಿಕೆ, ಕಾಶ್ಮೆರದಲ್ಲಿನ ಭಯೋತ್ಪಾದನೆ, ಈಶಾನ್ಯ ರಾಜ್ಯದ ಪ್ರತ್ಯೇಕತಾವಾದಿಗಳು, ಅಲ್ಪಸಂಖ್ಯಾತರು, ದಲಿತರು, ರೈತರು, ಕಾರ್ಮಿಕರು, ಜಲ-ನೆಲ-ಭಾಷೆಯ ತಂಟೆ ತಕರಾರುಗಳು...ಇಂತಹ ನೂರಾರು ಸಮಸ್ಯೆಗಳ ಬಗ್ಗೆ ತನ್ನ ನಿಲುವನ್ನು ರಾಜಕೀಯ ಪಕ್ಷ ಸ್ಪಷ್ಟಪಡಿಸಬೇಕಾಗುತ್ತದೆ. 

ಕಳೆದ 3-4 ದಶಕಗಳ ದೇಶದ ಇತಿಹಾಸವನ್ನು ನೋಡಿದರೆ ಎರಡು ಪ್ರಮುಖ ವಿಷಯಗಳು ನಮ್ಮ ರಾಜಕೀಯವನ್ನು ಪ್ರಭಾವಿಸುತ್ತಾ ಮತ್ತು ಅದರ ದಿಕ್ಕು-ದೆಸೆ ಬದಲಾಯಿಸುತ್ತಾ ಬಂದುದನ್ನು ಕಾಣಬಹುದು. ಮೊದಲನೆಯದು ಭ್ರಷ್ಟಾಚಾರ, ಎರಡನೆಯದು ಅಷ್ಟೇ ಮಹತ್ವದ ವಿಷಯವಾದ ಕೋಮುವಾದ.
 
ಈ ಎರಡನೆ ವಿಷಯದ ಬಗ್ಗೆ ಪ್ರಾರಂಭದಿಂದಲೂ ಅಣ್ಣಾ ತಂಡದ್ದು ಎಡೆಬಿಡಂಗಿ ನಿಲುವು. ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರ ಬಗ್ಗೆ ಪರ ಇಲ್ಲವೆ ವಿರುದ್ಧದ ಸ್ಪಷ್ಟ ನಿಲುವನ್ನು ಕೈಗೊಳ್ಳಲು ಈ ವರೆಗೂ ಸಾಧ್ಯವಾಗಲಿಲ್ಲ ಎನ್ನುವುದು ಇದಕ್ಕೆ ನಿದರ್ಶನ. ಇಷ್ಟು ಮಾತ್ರವಲ್ಲ, ಕಾಶ್ಮೆರದ ಉಗ್ರಗಾಮಿಗಳ ಬಗೆಗಿನ ಪ್ರಶಾಂತ್ ಭೂಷಣ್ ನಿಲುವನ್ನು ಅಣ್ಣಾಹಜಾರೆ ಅವರೇ ಒಪ್ಪಿಕೊಳ್ಳುವುದಿಲ್ಲ. 

ಯೋಗಗುರು ರಾಮದೇವ್ ಪ್ರತಿಪಾದಿಸುತ್ತಿರುವ ಆರ್ಥಿಕ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಒಪ್ಪಲಾರರು, ಕಿರಣ್ ಬೇಡಿ ಹೇಳುತ್ತಿರುವ ಯಾವ ವಿಚಾರವನ್ನೂ ತಂಡದಲ್ಲಿ ಯಾರೂ ಒಪ್ಪುವುದಿಲ್ಲ. ಇರುವ ನಾಲ್ಕುಮಂದಿಯಲ್ಲಿಯೇ ಈ ರೀತಿಯ ಭಿನ್ನಾಭಿಪ್ರಾಯಗಳಿರುವಾಗ ಪಕ್ಷಕ್ಕೆ ಎಲ್ಲಿಂದ ಸೈದ್ಧಾಂತಿಕ ಸ್ಪಷ್ಟತೆ ಬರಲು ಸಾಧ್ಯ?
ಐದನೆಯ ಪರೀಕ್ಷೆ ಎದುರಾಗಲಿರುವುದು ಅಣ್ಣಾತಂಡದ ಕಾರ್ಯಶೈಲಿಯ ವಿಷಯದಲ್ಲಿ. 

ಈಗಿನ ನಮ್ಮ ರಾಜಕೀಯ ಪಕ್ಷಗಳನ್ನು ಬಾಧಿಸುತ್ತಾ ಬಂದಿರುವುದು ಕೇವಲ ಭ್ರಷ್ಟಾಚಾರ ಅಲ್ಲ. ವ್ಯಕ್ತಿಪೂಜೆ, ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಹೈಕಮಾಂಡ್ ಸಂಸ್ಕೃತಿ, ಸರ್ವಾಧಿಕಾರಿ ಧೋರಣೆ, ಗುಪ್ತಕಾರ್ಯಸೂಚಿ ಇತ್ಯಾದಿ ರೋಗಗಳೂ ರಾಜಕೀಯ ಪಕ್ಷಗಳ ಮೇಲಿನ ಜನರ ನಂಬಿಕೆ ಕಡಿಮೆಯಾಗಲು ಕಾರಣ. 

ಕಳೆದ ಒಂದುವರ್ಷದ ಅವಧಿಯ ಅಣ್ಣಾತಂಡದ ಕಾರ್ಯಶೈಲಿಯನ್ನು ನೋಡಿದರೆ ಈ ಎಲ್ಲ ರೋಗಗಳ ಸೋಂಕು ಅದಕ್ಕೂ ತಗಲಿದ ಹಾಗಿದೆ. `ಅಣ್ಣಾ ಎಂದರೆ ಇಂಡಿಯಾ`, `ಐ ಯಾಮ್ ಅಣ್ಣಾ`, `ಅಣ್ಣಾ ಸಂಸತ್‌ಗಿಂತ ದೊಡ್ಡವರು` ಇತ್ಯಾದಿ ಘೋಷಣೆ ಅಣ್ಣಾ ಬೆಂಬಲಿಗರ ಮನಸ್ಸಿನ ಆಳದಲ್ಲಿರುವ ವ್ಯಕ್ತಿಪೂಜೆಯ ದೌರ್ಬಲ್ಯವನ್ನು ತೋರಿಸುತ್ತದೆ. 

ಅಣ್ಣಾತಂಡದ ಬೆರಳೆಣಿಕೆಯ ಸದಸ್ಯರೇ ಕೂಡಿ ಚಳವಳಿಯ ರೂಪುರೇಖೆ ಬಗ್ಗೆ ತೀರ್ಮಾನ ಕೈಗೊಂಡು ಇತರರ ಮೇಲೆ ಹೇರುತ್ತಿರುವುದನ್ನು ವಿರೋಧಿಸಿ ಪ್ರಾರಂಭದಲ್ಲಿ ಜತೆಗಿದ್ದ ಹಲವು ಸದಸ್ಯರು ಬಿಟ್ಟುಹೋಗಿದ್ದರು. 

ಎಷ್ಟೋ ಬಾರಿ ದೆಹಲಿಯಲ್ಲಿರುವ ಅಣ್ಣಾತಂಡದ ನಾಲ್ಕೈದು ಸದಸ್ಯರು ಕೂಡಿಕೈಗೊಳ್ಳುವ ತೀರ್ಮಾನಕ್ಕೆ ಬೆಂಗಳೂರಿನಲ್ಲಿರುವ ನಿವೃತ್ತನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆಯವರು ವಿರೋಧ ವ್ಯಕ್ತಪಡಿಸಿದ್ದುಂಟು. ಹಲವು ಬಾರಿ ಅಣ್ಣಾಹಜಾರೆಯವರೂ ಅಸಮಾಧಾನ ವ್ಯಕ್ತಪಡಿಸಿದ್ದರು. 

ಅಣ್ಣಾಹಜಾರೆಯವರ ಸರ್ವಾಧಿಕಾರಿ ಧೋರಣೆಯ ಕಾರ್ಯಶೈಲಿ ಈಗ ಲೋಕಪ್ರಸಿದ್ಧ, ಅವರ ಕರ್ಮಭೂಮಿಯಾಗಿರುವ ರಾಳೆಗಣಸಿದ್ದಿಗೆ ಹೋದರೆ ಇದರ ಪ್ರತ್ಯಕ್ಷದರ್ಶನ ಮಾಡಿಕೊಂಡು ಬರಬಹುದು. `ಮರಕ್ಕೆ ಕಟ್ಟಿ ಹೊಡೆದು ಬುದ್ದಿ ಕಲಿಸುವ` ಅಣ್ಣಾ ಮಾರ್ಗ, ಮನಪರಿವರ್ತನೆಯ ಮೂಲಕ ಸುಧಾರಣೆಯನ್ನು ತರುವ ಗಾಂಧಿಮಾರ್ಗಕ್ಕಿಂತ ಭಿನ್ನವಾದುದು. 

ಸಾಮಾನ್ಯವಾಗಿ ರಾಜಕೀಯ ನಾಯಕನ ವೈಯಕ್ತಿಕ ಗುಣಾವಗುಣಗಳು ಪಕ್ಷದ ನೀತಿ-ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷ ಕಟ್ಟುವ ತೀರ್ಮಾನ ಪ್ರಕಟಿಸಿದ ತಕ್ಷಣ ಎದುರಾಗಿರುವ ದೊಡ್ಡ ಆರೋಪ ಗುಪ್ತಕಾರ್ಯಸೂಚಿಯದ್ದು. ಒಂದು ಸಾಮಾಜಿಕ ಚಳವಳಿಯಾಗಿ ಬೆಳೆಯುತ್ತಾ ಬಂದ ಅಣ್ಣಾ ಚಳವಳಿ ರಾಜಕೀಯ ಪಕ್ಷದ ರೂಪಧಾರಣೆ ಮಾಡಿರುವುದು ಕೇವಲ ಆಕಸ್ಮಿಕವೇ, ಇದಕ್ಕೆ ಬೇರೆ ಏನಾದರೂ ಒತ್ತಡಗಳಿತ್ತೇ? ಇಲ್ಲವೆ ಇವೆಲ್ಲವೂ ಪೂರ್ವನಿಯೋಜಿತ ಕಾರ್ಯತಂತ್ರವೇ? ಎನ್ನುವ ಪ್ರಶ್ನೆಗಳು ಎದ್ದಿವೆ. 

ಇಂತಹದ್ದೊಂದು ಗುಪ್ತಕಾರ್ಯಸೂಚಿಯನ್ನು ಅವರು ಮೊದಲೇ ಹೊಂದಿದ್ದರು ಎಂಬ ಆರೋಪಗಳು ಕೂಡಾ ಕೇಳಿಬರುತ್ತಿವೆ. ಇದು ಸುಳ್ಳೇ ಇರಬಹುದು, ಆದರೆ ಚುನಾವಣಾ ಕಣದಲ್ಲಿ ನಿಂತು ಬೇರೆ ಪಕ್ಷಗಳ ವಿರುದ್ಧ, ಉದಾಹರಣೆಗೆ ಬಿಜೆಪಿ ವಿರುದ್ಧ `ಗುಪ್ತಕಾರ್ಯಸೂಚಿ`ಯ ಆರೋಪ ಮಾಡಿದಾಗ ಪ್ರತಿಯಾಗಿ ಅವರೂ ಈ ಆರೋಪ ಮಾಡಬಹುದಲ್ಲವೇ?

ಕೊನೆಯದಾಗಿ ಮಾಧ್ಯಮಗಳು ಒಡ್ಡುವ ಪರೀಕ್ಷೆಯನ್ನೂ ಅಣ್ಣಾತಂಡ ಎದುರಿಸಬೇಕಾಗಿದೆ. ಮಾಧ್ಯಮಗಳೇ ಅಣ್ಣಾಚಳವಳಿಯನ್ನು ಈಗಿನ ಮಟ್ಟಕ್ಕೆ ಒಯ್ದು ನಿಲ್ಲಿಸಿದ್ದು ಎಂಬ ಆರೋಪ ಇದೆ. ಮಾಧ್ಯಮದ ಅತಿಅವಲಂಬನೆ ಹೇಗೆ ತಿರುಗುಬಾಣ ಆಗಬಹುದು ಎನ್ನುವುದಕ್ಕೂ ಈ ಚಳವಳಿ ಒಳ್ಳೆಯ ಉದಾಹರಣೆ. 


ಅಣ್ಣಾಹಜಾರೆ ಅವರ ಎರಡು ಉಪವಾಸಗಳು ಮತ್ತು ಅದಕ್ಕೆ ಪೂರ್ವಭಾವಿಯಾಗಿ ನಡೆದ ಚಟುವಟಿಕೆಗಳನ್ನು ಮಾಧ್ಯಮಗಳು ಮುಖ್ಯವಾಗಿ ಟಿವಿ ಚಾನೆಲ್‌ಗಳು ದಿನದ ಇಪ್ಪತ್ತನಾಲ್ಕು ಗಂಟೆ ಕಾಲ ಪ್ರಸಾರ ಮಾಡಿ ಜನಪ್ರಿಯಗೊಳಿಸಿದ್ದು ನಿಜ. ಆದರೆ ಆ `ಮಧುಚಂದ್ರ`ದ ದಿನಗಳು ಈಗ ಮುಗಿದುಹೋಗಿವೆ. 

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ನಂತರ ಮಾಧ್ಯಮ ರಂಗವನ್ನು ಕೂಡಾ ಅಣ್ಣಾತಂಡ ತನ್ನ ಶತ್ರುಗಳ ಪಟ್ಟಿಯಲ್ಲಿ ಸೇರಿಸಿಕೊಂಡು ಬಿಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅಷ್ಟೇ ಪೈಪೋಟಿಯಿಂದ ಮಾಧ್ಯಮಗಳು ನೂರು ಕಣ್ಣುಗಳನ್ನು ಬಿಟ್ಟುಕೊಂಡು ನಿಂತಿವೆ. ಇದನ್ನು ಎದುರಿಸಲು ಅಣ್ಣಾತಂಡ ಮೈಯೆಲ್ಲ ಕಣ್ಣಾಗಿ ಇರಬೇಕಾಗುತ್ತದೆ.

Monday, July 30, 2012

`ಸಂದೇಶ' ಮರೆತು `ಸಂದೇಶವಾಹಕ'ರ ಬೆನ್ನತ್ತಿರುವ ಪೊಲೀಸರು July 30, 2012

`ನಗರದಲ್ಲಿ ನಡೆಯುವ ಅಪರಾಧಗಳ ಮಾಹಿತಿ ನಮಗೆ ಗೊತ್ತಾಗದೆ ಪತ್ರಕರ್ತರಿಗೆ ಹೇಗೆ ಗೊತ್ತಾಗುತ್ತದೆ?` ಎಂದು ಯಾರಾದರೂ ಪೊಲೀಸರು ಕೇಳಿದರೆ ಅವರು ತಮಗೆ ಗೊತ್ತಿಲ್ಲದೆಯೇ ತಾವು ಅದಕ್ಷರೆಂದು ಒಪ್ಪಿಕೊಂಡ ಹಾಗೆ. ಈಗ ದಕ್ಷಿಣ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಂತ್ ಕುಮಾರ್‌ಸಿಂಗ್ ಈ ಪ್ರಶ್ನೆ ಕೇಳಿದ್ದಾರೆ. ಅಷ್ಟು ಮಾತ್ರವಲ್ಲ ಕಳೆದ ಶನಿವಾರ ಪಡೀಲ್‌ನ ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ಹುಡುಗಿಯರೂ ಸೇರಿದಂತೆ ಹನ್ನೆರಡು ಮಂದಿ ನಿರಪರಾಧಿಗಳ ಮೇಲೆ ಹಲ್ಲೆ ನಡೆಸಿದ ಪಾಶವೀ ಕೃತ್ಯವನ್ನು ಚಿತ್ರೀಕರಿಸಿಕೊಂಡ ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ.

ಸಂದೇಶವನ್ನು ಪಕ್ಕಕ್ಕಿಟ್ಟು ಸಂದೇಶವಾಹಕರ ತಲೆಗೆ ಬಂದೂಕು ಇಡುವುದು ಪೊಲೀಸರ ಹಳೆಯ ಚಾಳಿ. ಅರಣ್ಯದಲ್ಲಿಯೇ ಹೋಗಿ ಟೆಂಟ್‌ಹಾಕಿದ್ದ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಸಾವಿರಾರು ಪೊಲೀಸರ ಕಣ್ಣಿಗೆ ಬೀಳದ ಪಾತಕಿ ವೀರಪ್ಪನ್‌ನನ್ನು ತಮಿಳುನಾಡಿನ `ನಕ್ಕೀರನ್`ಪತ್ರಿಕೆಯ ಸಂಪಾದಕ ಸಲೀಸಾಗಿ ಅತ್ತೆಮನೆಯಂತೆ ಹೋಗಿ ಸಂದರ್ಶನ ಮಾಡಿಬರುತ್ತಿದ್ದರು. ಆಗಲೂ ಪೊಲೀಸರು ಈ ಪ್ರಶ್ನೆ ಕೇಳಿದ್ದರು. 

ಶೋಧಕಾರ್ಯಕ್ಕೆ ಅನುಕೂಲವಾಗುವ ಅತ್ಯಾಧುನಿಕ ಸಲಕರಣೆಗಳ ಜತೆ ಈ ಕೆಲಸಕ್ಕಾಗಿಯೇ ವಿಶೇಷ ತರಬೇತಿ ಪಡೆದ ಪೊಲೀಸರು ಪತ್ತೆಹಚ್ಚಲಾಗದ ನಕ್ಸಲೀಯ ನಾಯಕರನ್ನು ಆಂಧ್ರಪ್ರದೇಶ, ಒರಿಸ್ಸಾ, ಛತ್ತೀಸ್‌ಘಡ, ಪಶ್ಚಿಮ ಬಂಗಾಳಗಳಲ್ಲಿ ಈಗಲೂ ಪತ್ರಕರ್ತರು ಹೋಗಿ ಮಾತನಾಡಿಸಿಕೊಂಡು ಬರುತ್ತಿದ್ದಾರೆ. ಅಲ್ಲಿಯ ಪೊಲೀಸರು ಕೂಡಾ ಇದೇ ಪ್ರಶ್ನೆ ಕೇಳುತ್ತಿದ್ದಾರೆ. ನಕ್ಸಲೀಯರನ್ನು ಸಂದರ್ಶಿಸಿದ ಪತ್ರಕರ್ತರನ್ನು ಮಾತ್ರವಲ್ಲ ನಕ್ಸಲೀಯರ ಪ್ರಭಾವ ಇರುವ ಪ್ರದೇಶಕ್ಕೆ ಭೇಟಿ ನೀಡಿ ಲೇಖನ ಬರೆದಿದ್ದ ಪ್ರಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧವೂ ಮೊಕದ್ದಮೆ ದಾಖಲಿಸುವ ಪ್ರಯತ್ನ ಮಾಡಿತ್ತು. ಇಂತಹ ಘಟನೆಗಳು ನೂರಾರು ಇವೆ.

ಪತ್ರಕರ್ತರೆಲ್ಲರೂ ಸಂಭಾವಿತರಿರಲಾರರು, ಟಿಆರ್‌ಪಿಗಾಗಿ ಕಿಡಿಗೇಡಿತನ ಮಾಡುತ್ತಿರುವ ಟಿವಿ ಚಾನೆಲ್‌ಗಳು ಅತಿರಂಜನೆ, ರೋಚಕತೆಯ ಬೆನ್ನುಹತ್ತಿ ಪತ್ರಿಕಾವೃತ್ತಿಯ ಮೂಲವ್ಯಾಖ್ಯೆಯನ್ನೇ ಬದಲಿಸಲು ಹೊರಟಿರುವುದೂ ನಿಜ. ಆದರೆ ಪೊಲೀಸರು ತಮ್ಮ ಅದಕ್ಷತೆಯನ್ನು ಮುಚ್ಚಿಕೊಳ್ಳಲು ಪತ್ರಕರ್ತರ `ಅಧಿಕಪ್ರಸಂಗ`ವನ್ನು ಗುರಾಣಿಯಾಗಿ ಬಳಸುತ್ತಿರುವುದು ಅಕ್ಷಮ್ಯ. ಮಂಗಳೂರು ನಗರದ ಉದಾಹರಣೆಯನ್ನೇ ತೆಗೆದುಕೊಂಡರೆ ಅಲ್ಲಿರುವುದು ಹೆಚ್ಚು ಪೊಲೀಸರೋ, ಪತ್ರಕರ್ತರೋ? ಅಲ್ಲಿನ ನಗರ ವ್ಯಾಪ್ತಿಯಲ್ಲಿ ಕನಿಷ್ಠ 25 ಪೊಲೀಸ್‌ಠಾಣೆಗಳಿರಬಹುದು, ಒಂದೊಂದು ಠಾಣೆಯಲ್ಲಿ ಕನಿಷ್ಠ 50 ಸಿಬ್ಬಂದಿ ಇರಬಹುದು. ಅಂದರೆ ಅಂದಾಜು 1250 ಪೊಲೀಸರಿದ್ದಾರೆ. ನಗರದಲ್ಲಿರುವ ಹಿರಿಯ-ಕಿರಿಯ ವರದಿಗಾರರನ್ನು ಒಟ್ಟು ಸೇರಿಸಿದರೂ ಸಂಖ್ಯೆ 50 ದಾಟಲಾರದು. ಈ 50 ಪತ್ರಕರ್ತರಿಗೆ ಅಪರಾಧಿ ಕೃತ್ಯಗಳು ತಕ್ಷಣ ಗೊತ್ತಾಗುವುದಿದ್ದರೆ, ಮೊಬೈಲ್, ವಾಕಿಟಾಕಿ, ಕಾರು-ಜೀಪು ಮತ್ತು ಶಸ್ತ್ರಾಸ್ತ್ರಗಳ ಜತೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿಯೇ ಇರುವ ಗುಪ್ತಚರ ವಿಭಾಗವನ್ನೂ ಹೊಂದಿರುವ 1250 ಸಿಬ್ಬಂದಿ ಸಾಮರ್ಥ್ಯದ ಪೊಲೀಸರಿಗೆ ಯಾಕೆ ಗೊತ್ತಾಗುತ್ತಿಲ್ಲ? 

ನಿರ್ದಿಷ್ಟವಾಗಿ ಶನಿವಾರ ಮಂಗಳೂರಿನಲ್ಲಿ ನಡೆದ ಘಟನೆಯ ಉದಾಹರಣೆಯನ್ನೇ ನೋಡುವುದಾದರೆ, ಘಟನೆ ನಡೆದ ಸ್ಥಳಕ್ಕೆ ಹೋಗಿದ್ದ ಟಿವಿ ಚಾನೆಲ್‌ನ ವರದಿಗಾರ ಮೊದಲು ಮಾಡಿದ್ದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಫೋನ್. ಅದರ ನಂತರ ಇನ್ನೊಂದು ಚಾನೆಲ್‌ನ ವರದಿಗಾರ ಕೂಡಾ ಅದೇ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ನ ಮೊಬೈಲ್‌ಗೆ ಪೋನ್ ಮಾಡಿದ್ದರು. ಆ ಅಧಿಕಾರಿ ಎತ್ತಲಿಲ್ಲವಂತೆ. (ಎಸ್‌ಪಿಯವರು ಮೊಬೈಲ್‌ನ ಕಾಲ್ ವಿವರ ತರಿಸಿಕೊಂಡು ತನಿಖೆ ನಡೆಸಲಿ) ಘಟನೆ ನಡೆದ ಸ್ಥಳಕ್ಕೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹೆಚ್ಚೆಂದರೆ 2-3ಕಿ.ಮೀ.ದೂರ. ಇಂತಹ ಘಟನೆಗಳು ನಡೆದಾಗ ಅಕ್ಕಪಕ್ಕದ ಮನೆಯವರಲ್ಲಿ ಯಾರಾದರೂ ಫೋನ್ ಮಾಡಿರುತ್ತಾರೆ. ಹೀಗಿದ್ದರೂ ಪೊಲೀಸರು ಸ್ಥಳಕ್ಕೆ ಹೋಗಲು ಅಷ್ಟೊಂದು ವಿಳಂಬ ಮಾಡಿದ್ದು ಯಾಕೆ? ಇಂತಹ ಘಟನೆಗಳು ನಡೆದಾಗ ದುಷ್ಕರ್ಮಿಗಳ ಸಂಖ್ಯೆ ಹೆಚ್ಚಿರುತ್ತದೆ ಎಂದು ಗೊತ್ತಿದ್ದರೂ ಮೊದಲು ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಯಾಕೆ ಕಳುಹಿಸಿಲ್ಲ? 

ದುಷ್ಕರ್ಮಿಗಳು ಹುಡುಗಿಯ ಎದೆಯ ಮೇಲೆ ಕೈಹಾಕುತ್ತಿದ್ದಾಗ ಅಲ್ಲಿಯೇ ಎದುರಿಗಿದ್ದ ಪೊಲೀಸರು ಕಣ್ಣುಕಣ್ಣುಬಿಟ್ಟು ನಿಂತಿದ್ದರಲ್ಲಾ, ಇದಕ್ಕೇನು ಅನ್ನುತ್ತೀರಿ ಪೊಲೀಸ್ ವರಿಷ್ಠಾಧಿಕಾರಿಯವರೇ? ಈ ದೃಶ್ಯಗಳನ್ನು ಟಿವಿಗಳಲ್ಲಿ ನೋಡಿದ ಯಾರಿಗೂ ಬರಿಗೈಯಲ್ಲಿಯಾದರೂ ಹೋಗಿ ಆ ದುಷ್ಕರ್ಮಿಗಳ ಮುಸುಡಿಗೆ ಗುದ್ದುವ ಎಂದಾಗುತ್ತದೆ, ಪೊಲೀಸರು ಕೈಯಲ್ಲಿದ್ದ ಲಾಠಿಯನ್ನೂ ಎತ್ತದೆ ನಿಂತಲ್ಲೇ ಕಲ್ಲಾಗಿದ್ದರಲ್ಲಾ?  ದಾಳಿಯಲ್ಲಿ ಪಾಲ್ಗೊಂಡವರೆಲ್ಲರ ಚಿತ್ರಗಳನ್ನು ಟಿವಿ ಚಾನೆಲ್‌ಗಳು ಪ್ರಸಾರಮಾಡಿವೆ. ಆದರೆ ಇಲ್ಲಿಯ ವರೆಗೆ ಬಂಧಿಸಿರುವುದು ಕೇವಲ ಎಂಟು ಮಂದಿಯನ್ನು. ಉಳಿದವರನ್ನು ಬಂಧಿಸಲು ಯಾಕೆ ಸಾಧ್ಯವಾಗಿಲ್ಲ?

ಪೊಲೀಸರು ಪತ್ರಕರ್ತರ ಮೇಲೆ ಹೊರಿಸುತ್ತಿರುವ ಆರೋಪ ಆತ್ಮರಕ್ಷಣೆಯ ಹತಾಶ ಪ್ರಯತ್ನ ಅಷ್ಟೆ. ವಾಸ್ತವ ಸಂಗತಿ ಏನೆಂದರೆ ದಕ್ಷಿಣಕನ್ನಡದಲ್ಲಿ ಪೊಲೀಸ್ ಇಲಾಖೆಯೇ ಇಲ್ಲ. ಯಾಕೆಂದರೆ ಅಲ್ಲಿ ಆಡಳಿತಾರೂಢ ಪಕ್ಷ ಮತ್ತು ಸಂಘ ಪರಿವಾರದ ನಾಯಕರ ಮಧ್ಯಪ್ರವೇಶದಿಂದಾಗಿ ದಕ್ಷತೆ, ಪ್ರಾಮಾಣಿಕತೆ ಮತ್ತು ವೃತ್ತಿನಿಷ್ಠೆಯಿಂದ ಕೆಲಸ ಮಾಡುವ ಪೊಲೀಸರಿಗೆ ಜಾಗವೇ ಇಲ್ಲದಂತಾಗಿದೆ. ಈಗ ಸಿಬಿಐಗೆ ವರ್ಗಾವಣೆಯಾಗಿರುವ ಸುಬ್ರಹ್ಮಣ್ಯೇಶ್ವರ ರಾವ್ ಎಂಬುವವರು ಸುಮಾರು ಎರಡೂವರೆ ವರ್ಷಗಳ ಕಾಲ ದಕ್ಷಿಣಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಅವರ ಕಾಲದಲ್ಲಿ ಹಿಂದೂ ಸಂಸ್ಕೃತಿಯ `ಮಾನ ಉಳಿಸುವ` ಹಾವಳಿ ಕಡಿಮೆ ಇತ್ತು. ಆದರೆ ಅವರಿಗೆ ಬಹಳ ದಿನ ಅಲ್ಲಿ ಉಳಿಯಲು ಆಗಲಿಲ್ಲ. ಸಂಘ ಪರಿವಾರದ ಸದಸ್ಯರ ವಿರುದ್ಧ ಕ್ರಮ ಕೈಗೊಂಡ ಸುಳ್ಯ ಪೊಲೀಸ್ ಠಾಣೆಯ ಅಧಿಕಾರಿಯ ಬೆಂಬಲಕ್ಕೆ ನಿಂತ ಕಾರಣಕ್ಕಾಗಿ ಆಡಳಿತಾರೂಢ ಪಕ್ಷಕ್ಕೆ ಸೇರಿದ ಸ್ಥಳೀಯ ರಾಜಕಾರಣಿಗಳ ಕಣ್ಣುಕೆಂಪಾಯಿತು. ಕೊನೆಗೆ ಅವರ ವರ್ಗಾವಣೆಯಾಯಿತು. ಈಗ ಹಿಂದೂ ಹುಡುಗಿಯ ಜತೆ ಮಾತನಾಡುತ್ತಿರುವ ಮುಸ್ಲಿಮ್ ಹುಡುಗರನ್ನು ಬೇಟೆಯಾಡುವ ಕಾರ್ಯಾಚರಣೆ ಮತ್ತೆ ಪ್ರಾರಂಭವಾಗಿದೆ. `ಈ ರೀತಿ ಪಾರ್ಟಿಗಳು ನಡೆಯುತ್ತಿರುವ ಸ್ಥಳಕ್ಕೆ ನುಗ್ಗಿ ದಾಂಧಲೆಗಳು ವಾರಕ್ಕೆ ಒಂದೆರಡಾದರೂ ಅಲ್ಲಿ ನಡೆಯುತ್ತಿವೆ. ಆದರೆ ಪೊಲೀಸರು ಮೊಕದ್ದಮೆ ದಾಖಲಿಸಿ ಕ್ರಮಕೈಗೊಳ್ಳದಿರುವ ಕಾರಣ ಅವುಗಳನ್ನೂ ವರದಿ ಮಾಡಲೂ ಆಗುತ್ತಿಲ್ಲ` ಎನ್ನುತ್ತಾರೆ ಸ್ಥಳೀಯ ಪತ್ರಕರ್ತರು.

ಸಾರ್ವಜನಿಕರು ತಮಗೆ ತಿಳಿದಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸದೆ ಪತ್ರಕರ್ತರಿಗೆ ಪೋನ್ ಮಾಡಿ ಯಾಕೆ ತಿಳಿಸುತ್ತಾರೆ ಎನ್ನುವುದನ್ನು ಕಂಡು ಹಿಡಿಯಲು ವಿಶೇಷ ತನಿಖೆಯ ಅಗತ್ಯ ಇಲ್ಲ. ಯಾಕೆಂದರೆ ದಕ್ಷಿಣ ಕನ್ನಡದ ಸಾಮಾನ್ಯ ಜನ ಪೊಲೀಸರ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಇದೇ ಮಂಗಳೂರಿನ ಪಬ್ ಮೇಲೆ ದಾಳಿ ನಡೆಸಿದ ಬಜರಂಗದಳದ ಸದಸ್ಯರು ಅಲ್ಲಿದ್ದ ಹುಡುಗಿಯರ ಕೂದಲು ಹಿಡಿದು ಎಳೆದಾಡಿದರು, ಹುಡುಗರ ಮೇಲೆ ಹಲ್ಲೆ ನಡೆಸಿದರು. ಆ ದುಷ್ಕೃತ್ಯದಲ್ಲಿ ತೊಡಗಿದ್ದವರಿಗೇನಾದರೂ ಶಿಕ್ಷೆಯಾಯಿತೇ? ಆ ಆರೋಪಿಗಳಲ್ಲಿ ಎಷ್ಟು ಮಂದಿ ಈಗ ಜೈಲಲ್ಲಿದ್ದಾರೆ? ಯಾವುದೋ ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದ ಹುಡುಗ-ಹುಡುಗಿಯನ್ನು ಪೊಲೀಸ್‌ಠಾಣೆಗೆ ಎಳೆದೊಯ್ದಾಗ, ಕಾನೂನು ಕೈಗೆತ್ತಿಕೊಂಡ ಪುಂಡರ ವಿರುದ್ಧ ದೂರು ದಾಖಲು ಮಾಡದೆ, ಆ ಹುಡುಗ-ಹುಡುಗಿಯ ಮೇಲೆ ಸುಳ್ಳು ಆರೋಪ ಹೊರಿಸಿದರೆ ಸಾರ್ವಜನಿಕರಿಗಾದರೂ ಪೊಲೀಸರ ಮೇಲೆ ಎಲ್ಲಿಂದ ನಂಬಿಕೆ ಬರಬೇಕು? 
ಮಂಗಳೂರಿನಲ್ಲಿ ಹಿಂದೂ ಮತ್ತು ಮುಸ್ಲಿಮ್ ಯುವಕರಲ್ಲಿ ತಮ್ಮದೇ ಆಗಿರುವ  `ಗುಪ್ತಚರ ವ್ಯವಸ್ಥೆ` ಇದೆ. ಹಿಂದೂ ಹುಡುಗಿಯ ಜತೆಗಿರುವ ಮುಸ್ಲಿಮ್ ಹುಡುಗರನ್ನು ಹುಡುಕಿಕೊಂಡು ಹಿಂದೂ ಯುವಕರು ಅಡ್ಡಾಡುತ್ತಿದ್ದರೆ, ಅವರನ್ನು ಹಿಂಬಾಲಿಸಿಕೊಂಡೇ  ಇರುವ ಮುಸ್ಲಿಮ್ ಯುವಕರ ಗುಂಪು ಕೂಡಾ ಇದೆ. ಇದೇ ರೀತಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಹಿಂಬಾಲಿಸುತ್ತಿದ್ದ ಮುಸ್ಲಿಮ್ ಯುವಕರಿಗೆ, ಅವರು ನಡೆಸಲು ಯೋಜಿಸಿರುವ `ಆಪರೇಷನ್ ಹೋಮ್-ಸ್ಟೇ`ಯ ಸುಳಿವು ಸಿಕ್ಕಿದೆ. ತಕ್ಷಣ ಅವರು ತಮಗೆ ಪರಿಚಯ ಇದ್ದ ಕೆಲವು ಚಾನೆಲ್ ವರದಿಗಾರರಿಗೆ ಸುದ್ದಿ ರವಾನಿಸಿದ್ದಾರೆ. ಪೊಲೀಸರಿಗೆ ತಿಳಿಸುವುದರಿಂದ ಏನೂ ಆಗಲಾರದು ಎಂದು ತೀರ್ಮಾನಕ್ಕೆ ಬರಲು ಅವರ ಅನುಭವ ಕಾರಣ ಇರಬಹುದು. ಇದು ದಕ್ಷಿಣ ಕನ್ನಡದ ಪೊಲೀಸ್ ವ್ಯವಸ್ಥೆ ತಲುಪಿರುವ ಸ್ಥಿತಿ. ಅಪರಾಧ ಪತ್ತೆಯಲ್ಲಿ ನೆರವಾಗುವುದು ಲಾಠಿ, ಬಂದೂಕು, ಗುಂಡುಗಳಲ್ಲ. ಅದು ಸಾರ್ವಜನಿಕವಾಗಿ ಪೊಲೀಸರು ಗಳಿಸುವ ವಿಶ್ವಾಸ. ಅದನ್ನು ಕಳೆದುಕೊಂಡರೆ ಹೀಗಾಗುತ್ತದೆ. 

ಪತ್ರಕರ್ತರು ಮತ್ತು ಪೊಲೀಸರು ಹಲವಾರು ವಿಷಯಗಳಲ್ಲಿ ಸಮಾನ ದುಃಖಿಗಳು. ಅದೇ ರೀತಿ ಕರ್ತವ್ಯನಿರ್ವಹಣೆಯ ಹಾದಿಯಲ್ಲಿ ಸಹಪ್ರಯಾಣಿಕರು. ಎಷ್ಟೋ ಅಪರಾಧಗಳ ಪತ್ತೆಕಾರ್ಯದಲ್ಲಿ ಪತ್ರಕರ್ತರು ಪೊಲೀಸರಿಗೆ ನೆರವಾಗಿದ್ದುಂಟು, ಅದೇ ರೀತಿ ಪತ್ರಕರ್ತರು ಯಾವುದಾದರೂ ಅಪಾಯದ ಸುಳಿಗೆ ಸಿಲುಕಬಹುದೆಂಬ ಸುಳಿವು ಸಿಕ್ಕಾಗ ಪೊಲೀಸರು ಎಚ್ಚರಿಸಿ ಕಾಪಾಡಿದ್ದುಂಟು. ಅಂತಹ ಸಂಬಂಧ ಇದ್ದ ಕಾಲದಲ್ಲಿ ಪತ್ರಕರ್ತರಿಗೆ ಬೇಕಾಗಿದ್ದ ಅಪರಾಧಗಳ ಸುದ್ದಿಯ ಮೂಲ ಪೊಲೀಸರು ಮಾತ್ರ ಆಗಿದ್ದರು. ಎಲ್ಲ ಸಂಬಂಧಗಳಂತೆ ಪೊಲೀಸರು ಮತ್ತು ಪತ್ರಕರ್ತರ ಸಂಬಂಧ ಕೂಡಾ ಬದಲಾಗಿದೆ. ಊರಲ್ಲಿ ನಡೆಯುವ ಅಪರಾಧಗಳ ಬಗ್ಗೆ ಕ್ರೈಮ್ ಬೀಟ್‌ನ ವರದಿಗಾರರು ಸಂಜೆ ಹೊತ್ತು ಕಂಟ್ರೋಲ್ ರೂಮ್‌ಗೆ ಫೋನ್ ಮಾಡಿ ಸುದ್ದಿ ಸಂಗ್ರಹಿಸುವ ಕಾಲ ಎಂದೋ ಸರಿದುಹೋಗಿದೆ. ಈಗ ಪೊಲೀಸರೇ ಟಿ.ವಿಯನ್ನು ನೋಡಿಕೊಂಡು ಅಪರಾಧಗಳ ಸುದ್ದಿ ಸಂಗ್ರಹಿಸುತ್ತಾರೆ. 

ಪೊಲೀಸ್ ವ್ಯವಸ್ಥೆಗೆ ಹಿಡಿದಿರುವ `ನಿಷ್ಕ್ರಿಯತೆಯ ರೋಗ`ದ ಮೂಲ ಭ್ರಷ್ಟ ಮತ್ತು ಸ್ವಾರ್ಥ ರಾಜಕಾರಣದಲ್ಲಿದೆ.  ರಾಜಕಾರಣಿಗಳ ಮಧ್ಯಪ್ರವೇಶದಿಂದಾಗಿ ಪೊಲೀಸರು ಕಾನೂನಿಗೆ ನಿಷ್ಠರಾಗಿ ಕರ್ತವ್ಯ ನಿರ್ವಹಿಸುವ ಸ್ಥಿತಿಯಲ್ಲಿ ಇಲ್ಲ. ಇದಕ್ಕೆ ಮುಖ್ಯ ಕಾರಣ  ದೇಶದಲ್ಲಿ ಈಗ ಜಾರಿಯಲ್ಲಿರುವ ಬ್ರಿಟಿಷರು 1861ರಲ್ಲಿ ರಚಿಸಿದ್ದ ಪೊಲೀಸ್ ಕಾಯ್ದೆ. ಆ ಕಾಲದಲ್ಲಿ `ಸಿಪಾಯಿ ದಂಗೆ`ಯಿಂದ ಭೀತಿಗೀಡಾಗಿದ್ದ ಬ್ರಿಟಿಷರು ತಮಗೆ `ರಾಜಕೀಯವಾಗಿ ಉಪಯೋಗವಾಗಬಲ್ಲ` ರೀತಿಯಲ್ಲಿ ಪೊಲೀಸ್ ವ್ಯವಸ್ಥೆ ಕಟ್ಟಲು ರೂಪಿಸಿದ ಕಾಯ್ದೆ ಈಗಿನ ರಾಜಕಾರಣಿಗಳಿಗೆ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಲು ಹೇಳಿಮಾಡಿಸಿದಂತಿದೆ. ಇದರ ಸುಧಾರಣೆಗಾಗಿ ಧರ್ಮವೀರ, ಜ್ಯುಲಿಯೊ ರೆಬಿರೋ ಹಾಗೂ ಪದ್ಮನಾಭಯ್ಯ ಅವರ ನೇತೃತ್ವದ ಆಯೋಗಗಳು ಪ್ರತ್ಯೇಕವಾಗಿ ಮೂರು ವರದಿಗಳನ್ನು ನೀಡಿವೆ. ಎನ್‌ಡಿಎ ಸರ್ಕಾರ ಹಿರಿಯ ವಕೀಲ ಸೋಲಿ ಸೊರಾಬ್ಜಿ ನೇತೃತ್ವದಲ್ಲಿ ಮತ್ತೊಂದು ಸಮಿತಿಯನ್ನು ರಚಿಸಿತ್ತು. ಕ್ರಿಮಿನಲ್ ನ್ಯಾಯವ್ಯವಸ್ಥೆಯ ಸುಧಾರಣೆಗಾಗಿ ನ್ಯಾಯಮೂರ್ತಿ ವಿ.ಎಸ್.ಮಳೀಮಠ ಅವರೂ ಒಂದು ವರದಿ ನೀಡಿದ್ದರು. ಪೊಲೀಸ್ ವ್ಯವಸ್ಥೆಯನ್ನು ರಾಜಕೀಯ ನಿಯಂತ್ರಣದಿಂದ ಮುಕ್ತಗೊಳಿಸುವುದು ಈ ಎಲ್ಲ ಸಮಿತಿ-ಆಯೋಗಗಳ ವರದಿಗಳ ಮೂಲ ಉದ್ದೇಶವಾಗಿತ್ತು. ಇದೇ ಕಾರಣಕ್ಕೆ ಯಾವ ರಾಜ್ಯ ಸರ್ಕಾರ ಕೂಡಾ ಇದನ್ನು ಜಾರಿಗೆ ತರಲು ಆಸಕ್ತಿ ತೋರುತ್ತಿಲ್ಲ.

ಈ ವರದಿಗಳನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ಪೊಲೀಸ್ ಸುಧಾರಣೆಗಾಗಿ ಕೆಲವು ಸಲಹೆಗಳನ್ನು ನೀಡಿ 2006ರ ಅಂತ್ಯದೊಳಗೆ ಅವುಗಳನ್ನು ಜಾರಿಗೆ ತರುವಂತೆ ಆದೇಶ ನೀಡಿತ್ತು. ಇದನ್ನು ನೇರವಾಗಿ ವಿರೋಧಿಸಲಾಗದ ರಾಜಕೀಯ ಪಕ್ಷಗಳು `ಇದು ಒಕ್ಕೂಟ ವ್ಯವಸ್ಥೆಗೆ ಕೊಡಲಿಯೇಟು`, `ನ್ಯಾಯಾಂಗದ ಅತಿಕ್ರಮಣಕಾರಿ ನಿಲುವು` ಇತ್ಯಾದಿ ಜನಪ್ರಿಯ ಆರೋಪಗಳ ಮೂಲಕ ವಿರೋಧಿಸುತ್ತಾ ಕಾಲ ತಳ್ಳುತ್ತಿವೆ. ಪೊಲೀಸರಿಗೆ ತಮ್ಮ ಅಸಹಾಯಕತೆಯ ಕಾರಣಗಳು ಗೊತ್ತಿದ್ದರೂ ಅದನ್ನು ಹೇಳಲಾಗದೆ ತಮ್ಮ ನಿಷ್ಕ್ರಿಯತೆಯನ್ನು ಮುಚ್ಚಿಕೊಳ್ಳಲು ಹೊಸ ಹೊಸ ಬಲಿಪಶುಗಳನ್ನು ಹುಡುಕುತ್ತಿರುತ್ತಾರೆ. ಮಂಗಳೂರಿನ ಪೊಲೀಸರ ಕೈಗೆ ಪತ್ರಕರ್ತರು ಸಿಕ್ಕಿದ್ದಾರೆ, ಆದರೆ ಇದು ಕೈಸುಡುವ ಕೆಂಡ ಎಂದು ಅವರಿಗೂ ಗೊತ್ತು.

Thursday, July 26, 2012

ಹಳೆಯ ಕನಸಿನ ಚುಂಗು ಹಿಡಿದು ಹೊರಟಿರುವ ಪವಾರ್ July 23, 2012

ಬಹುಕಾಲದಿಂದ ದೇಶದ ರಾಜಕೀಯ ಅಖಾಡದಲ್ಲಿರುವ ಶರದ್ ಪವಾರ್, ಮುಲಾಯಂಸಿಂಗ್ ಯಾದವ್, ಎಚ್.ಡಿ.ದೇವೇಗೌಡರಂತಹ  ಹಳೆಯ ಜಟ್ಟಿಗಳು ಸುಮ್ಮನೆ ಕೆಮ್ಮುವುದಿಲ್ಲ, ಆಕಳಿಸುವುದೂ ಇಲ್ಲ. ಮೇಲ್ನೋಟಕ್ಕೆ ಸಹಜವಾಗಿ ಕಾಣುವ ಕೆಮ್ಮು-ಆಕಳಿಕೆಗಳ ಆಳದಲ್ಲಿ ರಾಜಕೀಯ ಹವಾಮಾನದ ಮುನ್ಸೂಚನೆಗಳಿರುತ್ತವೆ.

ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದ ಕಾರಣದಿಂದಾಗಿ ಮನೆಯೊಳಗೆ ಉಳಿದುಕೊಂಡಿದ್ದ ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಇದ್ದಕ್ಕಿದ್ದಂತೆ ಲವಲವಿಕೆಯಿಂದ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಿರುವುದಕ್ಕೂ, ಬಿಜೆಪಿಯ ಅತೃಪ್ತ ಶಾಸಕರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನೆ ಮುಂದೆ ಕ್ಯೂ ನಿಲ್ಲುವುದಕ್ಕೂ ಪರಸ್ಪರ ಸಂಬಂಧ ಮೇಲ್ನೋಟಕ್ಕೆ ಕಾಣಿಸದೆ ಇರಬಹುದು.

ಆದರೆ ಗೌಡರ ರಾಜಕೀಯ ನಡೆಗಳನ್ನು ನೋಡುತ್ತಾ ಬಂದವರಿಗೆ ಅವರ ಆರೋಗ್ಯ ಸುಧಾರಣೆ ಮತ್ತು ರಾಜಕೀಯ ಬೆಳವಣಿಗೆಗಳಿಗೂ ಸಂಬಂಧ ಕಲ್ಪಿಸುವುದು ಕಷ್ಟವಲ್ಲ. ಅದೇ ರೀತಿ ಕೇಂದ್ರ ಸಚಿವ ಶರದ್ ಪವಾರ್.

ಸಂಪುಟದಲ್ಲಿ ಎರಡನೇ ಸ್ಥಾನ ನೀಡದೆ ಇರುವುದರಿಂದ ಅತೃಪ್ತರಾಗಿ ಸರ್ಕಾರದಿಂದಲೇ ಹೊರಬರುವ ಘೋಷಣೆಯನ್ನು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮಾಡಿದೆ.

ಒಂದು ಕಾಲದಲ್ಲಿ ದೇಶದ ಪ್ರಧಾನಿಯಾಗಬೇಕೆಂದು ಹಂಬಲಿಸಿದ್ದ, ಅದಕ್ಕೆ ಬೇಕಾಗಿರುವ ಎಲ್ಲ ತಂತ್ರ-ಕುತಂತ್ರಗಳನ್ನು ಮಾಡಿ ವಿಫಲಗೊಂಡ ಪವಾರ್ ಈಗ ಸಂಪುಟದಲ್ಲಿ ಯಕಶ್ಚಿತ್ ಎರಡನೆ ಸ್ಥಾನಕ್ಕಾಗಿ ಕಾಂಗ್ರೆಸ್ ಜತೆ ಸಂಬಂಧ ಕಡಿದುಕೊಳ್ಳುವ ಮಟ್ಟಕ್ಕೆ ಹೋಗುವ  ಅವರ ನಿರ್ಧಾರವನ್ನು ಮುಖಬೆಲೆಯಲ್ಲಿಯೇ ಒಪ್ಪಿಕೊಳ್ಳುವುದು ಕಷ್ಟ.

`ಮನಮೋಹನ್‌ಸಿಂಗ್ ಅವರನ್ನು ಬದಲಾವಣೆ ಮಾಡುವುದಿದ್ದರೆ ಆ ಸ್ಥಾನದಲ್ಲಿಯೇ ನನ್ನನ್ನೇ ಕೂರಿಸಿ` ಎನ್ನುವ ಹಾಗಿದೆ ಪವಾರ್ ಬೇಡಿಕೆ. ಮೈತ್ರಿಕೂಟದ ಸರ್ಕಾರದಲ್ಲಿ ಅತ್ಯಂತ ಹೆಚ್ಚು ಸದಸ್ಯ ಬಲ ಹೊಂದಿರುವ ಪಕ್ಷ ನೇತೃತ್ವ ವಹಿಸುವ ಸಾಮಾನ್ಯ ಸಂಪ್ರದಾಯ ಪವಾರ್ ಅವರಿಗೆ ತಿಳಿಯದೆ ಇರಲು ಸಾಧ್ಯವೇ ಇಲ್ಲ.

ಸಂಪುಟದಲ್ಲಿ ಎರಡನೆ ಸ್ಥಾನವಾಗಲಿ, ಪ್ರಧಾನಿಯವರ ಗೈರುಹಾಜರಿಯಲ್ಲಿ ಉಸ್ತುವಾರಿ ನೋಡಿಕೊಳ್ಳುವವರ ಸ್ಥಾನವಾಗಲಿ ಅಧಿಕೃತ ಸ್ಥಾನಮಾನ ಅಲ್ಲ. ಎರಡನೆ ಸ್ಥಾನದಲ್ಲಿರುವವರೇ ಅಧಿಕಾರದಲ್ಲಿರುವ ಪ್ರಧಾನಿಯ ಉತ್ತರಾಧಿಕಾರಿ ಆಗುವುದಿಲ್ಲ.

ಲೋಕಸಭೆ ಇಲ್ಲವೆ ವಿಧಾನಸಭಾ ಸದಸ್ಯರಾಗದೆ ಇರುವವರು ಕೂಡಾ ಆರು ತಿಂಗಳ ಕಾಲ ಪ್ರಧಾನಿ ಇಲ್ಲವೆ ಮುಖ್ಯಮಂತ್ರಿಯಾಗಲು ಸಾಧ್ಯವಿರುವಷ್ಟು ಉದಾರವಾದಿ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದು. ಪ್ರಧಾನಿಯಾಗುವವರು ಯಾರೆನ್ನುವುದೇ ಖಾತರಿ ಇಲ್ಲದೆ ಇರುವ ವಾತಾವರಣದಲ್ಲಿ ಸಂಪುಟದಲ್ಲಿ ಎರಡನೆ ಸ್ಥಾನವನ್ನು ಕಟ್ಟಿಕೊಂಡು ಏನು ಮಾಡುತ್ತೀರಿ?

ಪವಾರ್  ನಿರ್ಧಾರದ  ಬಗ್ಗೆ ಸಂಶಯ ಮೂಡಲು ಇನ್ನೊಂದು ಕಾರಣವೂ ಇದೆ. ಕಾಂಗ್ರೆಸ್ ಪಕ್ಷದ ಇಚ್ಛೆಗೆ ವಿರುದ್ಧವಾಗಿ ರಾಷ್ಟ್ರಪತಿ ಅಭ್ಯರ್ಥಿಯಾಗಲು ಹೊರಟ ಪಿ.ಎ.ಸಂಗ್ಮಾ ತಮ್ಮ ಬಹುಕಾಲದ ಸಂಗಾತಿ ಎನ್ನುವುದನ್ನೇ ಲೆಕ್ಕಿಸದೆ ಪಕ್ಷದಿಂದ ಉಚ್ಚಾಟಿಸಿದವರು ಪವಾರ್.

ಕನಿಷ್ಠ ಅವರನ್ನು ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್‌ಮೇಲೆ ಒತ್ತಡ ಹೇರಬಹುದಿತ್ತು, ಕಾಂಗ್ರೆಸ್ ಬಳಿ ಕೂಡಾ ಆ ಸ್ಥಾನಕ್ಕೆ ಸರಿಯಾದ ಅಭ್ಯರ್ಥಿಗಳಿರಲಿಲ್ಲ, ಅದಕ್ಕಲ್ಲವೇ ಅನ್ಸಾರಿ ಅವರಿಗೆ ಮತ್ತೊಂದು ಅವಕಾಶ ನೀಡಿದ್ದು? ಪವಾರ್ ಹಾಗೆ ಮಾಡಿದ್ದರೆ ಅದು ಖಂಡಿತ ಸ್ವಾರ್ಥ ಎಂದು ಯಾರಿಗೂ ಅನಿಸುತ್ತಿರಲಿಲ್ಲ.

ಸಂಗ್ಮಾ ಅವರ ಬೆಂಬಲಕ್ಕೆ ಪವಾರ್ ದೃಢವಾಗಿ ನಿಂತಿದ್ದರೆ ರಾಷ್ಟ್ರಪತಿ ಚುನಾವಣೆಯ ಗಣಿತವೇ ಬದಲಾಗಿ ಯುಪಿಎ ಈಗಿನಷ್ಟು ಬಲಿಷ್ಠವಾಗಿ ಹೊರಹೊಮ್ಮುತ್ತಿರಲಿಲ್ಲ. ಅಂತಹ ಸಮಯದಲ್ಲಿ ಯುಪಿಎಗೆ ಸಂಪೂರ್ಣವಾಗಿ ಶರಣಾದ ಪವಾರ್ ಇನ್ನೇನು ಚುನಾವಣೆ ಮುಗಿಯುವ ಹೊತ್ತಿಗೆ ಗುಟುರು ಹಾಕುತ್ತಿರುವುದಕ್ಕೆ ಕೇವಲ ನಂಬರ್ 2 ಸ್ಥಾನವೊಂದೇ ಕಾರಣ ಇರಲಾರದು.

ಅದೇನು ಎಂಬುದನ್ನು ಪವಾರ್ ಅವರು ಬಹಿರಂಗಪಡಿಸಬೇಕು. ಮೈತ್ರಿಕೂಟ ಸರ್ಕಾರ ಎಂದ ಮಾತ್ರಕ್ಕೆ ಆರಿಸಿ ಕಳುಹಿಸಿದ ಮತದಾರರನ್ನು ಕತ್ತಲಲ್ಲಿಟ್ಟು ಎಲ್ಲವನ್ನೂ ಮುಚ್ಚಿದ ಕೋಣೆಯೊಳಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ.

ರಾಜಕೀಯವಾಗಿ ತನ್ನನ್ನು ಬೆಳೆಸಿದ್ದ ವಸಂತದಾದಾ ಪಾಟೀಲ್ ಎಂಬ ಗುರುವಿಗೆ ತಿರುಮಂತ್ರ ಹೇಳಿ 38ನೇ ವರ್ಷಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ಶರದ್ ಪವಾರ್ ಅವರ ಈಗಿನ ನಿರ್ಧಾರವನ್ನು, ಅವರ ಹಿಂದಿನ ಎಲ್ಲ ರಾಜಕೀಯ ನಿರ್ಧಾರಗಳ ಜತೆಯಲ್ಲಿಟ್ಟು ನೋಡಿದರೆ ಮಾತ್ರ ಅರ್ಥಮಾಡಿಕೊಳ್ಳಲು ಸಾಧ್ಯ. `ಪಕ್ಷಾಂತರ, ಭ್ರಷ್ಟಾಚಾರ, ವಿಶ್ವಾಸದ್ರೋಹ, ಸ್ವಜನ ಪಕ್ಷಪಾತ, ಆತ್ಮವಂಚನೆ, ಕರ್ತವ್ಯಲೋಪ...

ಹೀಗೆ ರಾಜಕಾರಣಿಗಳಿಗೆ ಇರುವ ಎಲ್ಲ ದುರ್ಗುಣಗಳನ್ನು ಹೊಂದಿಯೂ, ಅವುಗಳಿಂದ ಯಾವ ಹಿನ್ನಡೆಯನ್ನೂ ಅನುಭವಿಸದೆ ದಶಕಗಳ ಕಾಲ ರಾಜಕೀಯ ವರ್ಚಸ್ಸನ್ನು ಉಳಿಸಿಕೊಳ್ಳಲು ಸಾಧ್ಯವೇ? ಸಾಧ್ಯ ಇದೆ, ಅದಕ್ಕಾಗಿ ಶರದ್‌ಚಂದ್ರ ಗೋವಿಂದರಾವ್ ಪವಾರ್ ಆಗಬೇಕು` ಎಂದು ನಾನು ಹಿಂದೆ ಇದೇ ಅಂಕಣದಲ್ಲಿ (17,ಜನವರಿ 2011) ಬರೆದಿದ್ದೆ.

ಈ ಮಾತುಗಳು ಈಗಲೂ ಅವರಿಗೆ ಅನ್ವಯಿಸುತ್ತವೆ. ಅರ್ಧ ಶತಮಾನದಷ್ಟು ಸುದೀರ್ಘವಾದ ತಮ್ಮ ರಾಜಕೀಯ ಜೀವನದಲ್ಲಿ ಶರದ್ ಪವಾರ್ ಭಾರತದ ಇಂದಿನ ರಾಜಕಾರಣಿ ಸಾಮಾನ್ಯವಾಗಿ ಮಾಡುತ್ತಿರುವ ಯಾವ ಕೆಟ್ಟ ಕೆಲಸವನ್ನು ಮಾಡದೆ ಬಿಟ್ಟಿಲ್ಲ, ಅವರು ಎದುರಿಸದ ಆರೋಪಗಳೇ ಇಲ್ಲ.

ಆದರೆ ಇದ್ಯಾವುದೂ ಅವರನ್ನು ಒಟ್ಟು ಏಳು ವರ್ಷಗಳ ಕಾಲ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವುದನ್ನು, ಒಟ್ಟು ಹತ್ತು ವರ್ಷಗಳ ಕಾಲ ಕೇಂದ್ರ ಸಚಿವರಾಗುವುದನ್ನು, ಬಿಸಿಸಿಐ,ಐಸಿಸಿ ಅಧ್ಯಕ್ಷರಾಗುವುದನ್ನು ತಡೆಯಲಿಲ್ಲ.

ಇದು ಶರದ್ ಪವಾರ್. ಹೆಚ್ಚು ಕಡಿಮೆ ಅವರಷ್ಟೇ ದೀರ್ಘ ಅವಧಿಯ ರಾಜಕಾರಣ ನಡೆಸಿದ್ದ ಎಸ್.ಬಂಗಾರಪ್ಪ, ಎಚ್.ಡಿ.ದೇವೇಗೌಡ, ಬಿ.ಎಸ್.ಯಡಿಯೂರಪ್ಪನವರು ಅನುಭವಿಸಿದ ಅಧಿಕಾರದ ಅವಧಿ ಎಷ್ಟು?

ಬೆಂಬಲಿಗರು ಅಭಿಮಾನದಿಂದ `ಸಾಹೇಬ್` ಎಂದು ಕರೆಯುವ ಶರದ್ ಪವಾರ್ ಅವರ ರಾಜಕೀಯ ಪ್ರಾಣವಾಯು ಮಹಾರಾಷ್ಟ್ರದಲ್ಲಿದೆ. ಅಲ್ಲಿ ತನ್ನ ನಿಯಂತ್ರಣ ಸಡಿಲಗೊಳ್ಳುತ್ತಿದೆ ಎಂದು ಅನಿಸಿದ ಕೂಡಲೇ ಅವರು ಅಧೀರರಾಗುತ್ತಾರೆ.

ತಮ್ಮದೇ ಬೆಂಬಲಿಗ ಸುಧಾಕರ್ ನಾಯಕ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿ ದೇಶ ಆಳುವ ಆಸೆಯೊಂದಿಗೆ ದೆಹಲಿಗೆ ಹೋಗಿದ್ದ ಪವಾರ್, ಯಾಕೋ ಶಿಷ್ಯ ನಿಯಂತ್ರಣ ತಪ್ಪಿಹೋಗುತ್ತಿದ್ದಾನೆ ಎಂದು ಅನಿಸಿದ ಕೂಡಲೇ ಮತ್ತೆ ಮಹಾರಾಷ್ಟ್ರಕ್ಕೆ ಓಡಿಹೋಗಿ ಮುಖ್ಯಮಂತ್ರಿಯಾದವರು.

1992ರ ಮುಂಬೈ ಕೋಮುಗಲಭೆ ಅಷ್ಟೊಂದು ಅತಿರೇಕಕ್ಕೆ ಹೋಗಲು ಯಾರು ಕಾರಣಕರ್ತರು ಎನ್ನುವುದನ್ನು ಯಾರಾದರೂ ತನಿಖೆ ನಡೆಸಿದರೆ ಪವಾರ್ ತಮ್ಮ ಜಾತ್ಯತೀತ ನಿಲುವನ್ನು ಸಮರ್ಥಿಸಿಕೊಳ್ಳಲು ಪರದಾಡಬೇಕಾಗಬಹುದು.

ವಿಲಾಸ್‌ರಾವ್ ದೇಶ್‌ಮುಖ್, ಸುಶೀಲ್‌ಕುಮಾರ್ ಶಿಂಧೆ, ಅಶೋಕ್ ಚವಾಣ್ ಹೀಗೆ ಯಾರೂ ಕೂಡಾ ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದಲ್ಲಿ ನೆಲೆ ಊರುವುದನ್ನು ಈ `ಸಾಹೇಬ್` ಸಹಿಸುವುದಿಲ್ಲ.

ಈಗ ಅವರ ಕಣ್ಣು  ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುವ ಪೃಥ್ವಿರಾಜ್ ಚವಾಣ್ ಎಂಬ ಇನ್ನೊಬ್ಬ ಮರಾಠನ ಮೇಲೆ ಬಿದ್ದಿದೆ.  ಹಳಿತಪ್ಪಿಹೋಗಿದ್ದ ಮಹಾರಾಷ್ಟ್ರದ ಆಡಳಿತವನ್ನು ಪ್ರಚಾರದ ಹಪಾಹಪಿ ಇಲ್ಲದೆ ಸದ್ದಿಲ್ಲದ ರೀತಿಯಲ್ಲಿ ಸರಿದಾರಿಗೆ ತರಲು ಪ್ರಯತ್ನಿಸುತ್ತಿರುವ ಚವಾಣ್ ಇತ್ತೀಚೆಗೆ ಎನ್‌ಸಿಪಿ ಸಚಿವರ ಭ್ರಷ್ಟಾಚಾರದ ಬೆನ್ನಿಗೆ ಬಿದ್ದಿದ್ದಾರೆ.

ಶರದ್ ಪವಾರ್ ಮತ್ತು ಅವರ ಬೆಂಬಲಿಗರಿಗೆ ತಮ್ಮ ಕಪಾಟಿನ ತುಂಬ ಇರುವ ಅಸ್ಥಿಪಂಜರಗಳ ಬಗ್ಗೆ ಭಯ ಇದೆ. ಕರ್ನಾಟಕವನ್ನು ಮೀರಿಸುವ ಭೂಹಗರಣಗಳು ಅಲ್ಲಿ ನಡೆದಿವೆ.

ಪವಾರ್ ಮಗಳು ಮತ್ತು ಅಳಿಯ ಅವರನ್ನೊಳಗೊಂಡ ಕೃಷ್ಣಾ ಕಣಿವೆ ಅಭಿವೃದ್ಧಿ ನಿಗಮದ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಬಹಳಷ್ಟು ವರ್ಷಗಳಿಂದ ಮಹಾರಾಷ್ಟ್ರ ರಾಜಕೀಯವನ್ನು ರಿಯಲ್ ಎಸ್ಟೇಟ್ ಕುಳಗಳು ಮತ್ತು ಸಹಕಾರಿ ಕ್ಷೇತ್ರದ ತಿಮಿಂಗಲಗಳ ಲಾಬಿ ನಿಯಂತ್ರಿಸುತ್ತಿವೆ.

ಈ ಲಾಬಿಗಳಿಗೆ ಸಮೀಪವಾಗಿರುವವರು ಶರದ್‌ಪವಾರ್. ಸುಮಾರು ಹನ್ನೆರಡು ಕೋಟಿ ರೂಪಾಯಿ ಠೇವಣಿ ಹೊಂದಿರುವ ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಪವಾರ್ ಕುಟುಂಬದ ಮುಷ್ಟಿಯೊಳಗಿದೆ.

ಈ ಬ್ಯಾಂಕ್‌ನ ಸದಸ್ಯತ್ವ ಹೊಂದಿರುವ 169 ಸಕ್ಕರೆ ಕಾರ್ಖಾನೆಗಳಲ್ಲಿ 95 ಪವಾರ್ ನಿಯಂತ್ರಣದಲ್ಲಿದೆಯಂತೆ. ಇತ್ತೀಚೆಗೆ ಅವ್ಯವಹಾರದ ಆರೋಪಕ್ಕೆ ಈಡಾಗಿದ್ದ ಈ ಸಹಕಾರಿ ಬ್ಯಾಂಕ್‌ಗೆ ಮುಖ್ಯಮಂತ್ರಿ ಚವಾಣ್ ಅವರು ಆಡಳಿತಾಧಿಕಾರಿಯನ್ನು ನೇಮಿಸಿದ್ದಾರೆ.

ಮೈತ್ರಿಕೂಟದ ಸರ್ಕಾರದುದ್ದಕ್ಕೂ ಎನ್‌ಸಿಪಿ ಬಳಿಯೇ ಇರುವ ನೀರಾವರಿ ಖಾತೆಯಲ್ಲಿನ ಭ್ರಷ್ಟಾಚಾರವನ್ನು ಇತ್ತೀಚೆಗೆ ಆರ್‌ಟಿಐ ಕಾರ್ಯಕರ್ತರೊಬ್ಬರು ಬಯಲುಗೊಳಿಸಿದ ನಂತರ ಚವಾಣ್ ಅವರು ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸುವ ಸನ್ನಾಹದಲ್ಲಿದ್ದಾರೆ.

ಇದು ಶರದ್‌ಪವಾರ್ ಸಿಡಿಮಿಡಿಗೊಳ್ಳಲು ಮುಖ್ಯವಾದ ಕಾರಣ.
ಶರದ್ ಪವಾರ್ ಪ್ರಾರಂಭದಿಂದಲೂ ಕೃಷಿ ಕ್ಷೇತ್ರದ ಜತೆ ತಮ್ಮನ್ನು ಗುರುತಿಸಿಕೊಂಡವರು. ಅವರ ಆಸಕ್ತಿ ಮತ್ತು ಸಾಧನೆಗೆ ಸ್ವಕ್ಷೇತ್ರವಾದ ಬಾರಾಮತಿ ಸಾಕ್ಷಿ.

ಕೃಷಿ, ವಾಣಿಜ್ಯ, ಕೈಗಾರಿಕೆ ಮತ್ತು ಶಿಕ್ಷಣದ ಕೇಂದ್ರವಾಗಿ ಪವಾರ್ ಈ ಕ್ಷೇತ್ರವನ್ನು ಬೆಳೆಸಿದ್ದಾರೆ. ಈ ಅನುಭವದ ಹಿನ್ನೆಲೆಯಲ್ಲಿಯೇ ಪ್ರಧಾನಿ ಮನಮೋಹನ್‌ಸಿಂಗ್ ಪವಾರ್ ಅವರಿಗೆ ಕೃಷಿ ಖಾತೆಯನ್ನು ನೀಡಿದ್ದು.

ಗ್ರಾಮೀಣ ಮೂಲಸೌಕರ್ಯ, ನೀರಾವರಿ, ದಾಸ್ತಾನು ಮಳಿಗೆಗಳ ಸೌಲಭ್ಯ, ಗ್ರಾಮೀಣ ರಸ್ತೆ ಸಂಪರ್ಕ ಮತ್ತು ಸ್ಥಳೀಯ ಕೃಷಿ ಮಾರುಕಟ್ಟೆಯ ಕೊರತೆಗಳಿಂದ ಬಳಲುತ್ತಿರುವ ಕೃಷಿ ಕ್ಷೇತ್ರ, ಪವಾರ್ ಈ ಖಾತೆಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗ ಹೇಗಿತ್ತೋ, ಅದಕ್ಕಿಂತಲೂ ಹೆಚ್ಚು ಕೆಟ್ಟು ಹೋಗಿದೆ.

ಇದರ ಜತೆಗೆ ನಾಲ್ಕು ದಿಕ್ಕುಗಳಿಂದಲೂ ಆವರಿಸುತ್ತಿರುವ ಬರದ ಕರಿನೆರಳು, ಕುಸಿಯುತ್ತಿರುವ ಕೃಷಿ ಉತ್ಪಾದನೆ, ಏರುತ್ತಲೇ ಇರುವ ಕೃಷಿ ಕ್ಷೇತ್ರದ ಹಣದುಬ್ಬರ ಯುಪಿಎ ಸರ್ಕಾರದ ತಲೆನೋವನ್ನು ಇನ್ನಷ್ಟು ಹೆಚ್ಚಿಸಿದೆ.

ಬರ ಪರಿಸ್ಥಿತಿ ಬಗ್ಗೆ ಅವರು ನೀಡುತ್ತಿರುವ ಉಡಾಫೆತನದ ಹೇಳಿಕೆಗಳು ನೊಂದ ರೈತವರ್ಗ ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಮಾಡಿದೆ. ಕರ್ತವ್ಯಲೋಪದ ಈ ಅಪವಾದದಿಂದ ತಪ್ಪಿಸಿಕೊಳ್ಳುವುದು ಕೂಡಾ ಸಂಪುಟದಿಂದ ಹೊರಗೆ ಹೋಗುವ ಪವಾರ್ ಅವರ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ.

ಪವಾರ್ ಅವರ ಮೆದು ಬಂಡಾಯಕ್ಕೆ ಇನ್ನೂ ಒಂದು ಕಾರಣ ಇದ್ದ ಹಾಗಿದೆ. ಪ್ರಧಾನಿ ಪಟ್ಟದ ಮೇಲಿನ ವ್ಯಾಮೋಹ ಅವರನ್ನು ಇನ್ನೂ ಬಿಟ್ಟಿಲ್ಲ. ಆಂತರಿಕ ಬಿಕ್ಕಟ್ಟಿನಿಂದಾಗಿ ದುರ್ಬಲಗೊಳ್ಳುತ್ತಿರುವ ಪ್ರಮುಖ ವಿರೋಧಪಕ್ಷವಾದ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವಾಗಿ ಹೊರಹೊಮ್ಮುವ ಸಾಧ್ಯತೆ ಕ್ಷೀಣವಾಗುತ್ತಿರುವುದು ಪವಾರ್ ಅವರಂತಹ ಪ್ರಾದೇಶಿಕ ಪಕ್ಷಗಳ ಪಾಳೆಯಗಾರರ ಎದೆಯೊಳಗೆ ಆಸೆಯ ಕಿಚ್ಚು ಹಚ್ಚಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭೆಯ ಚುನಾವಣೆಯ ನಂತರ ತೃತೀಯರಂಗಕ್ಕೆ ಸೇರಿದ ಪಕ್ಷಗಳು ಸೇರಿ ಕಾಂಗ್ರೆಸ್ ಇಲ್ಲವೇ ಬಿಜೆಪಿ ಬೆಂಬಲದೊಡನೆ ಸರ್ಕಾರ ರಚನೆಯ ಪ್ರಯತ್ನ ಮಾಡಿದರೆ ಅದರ ನಾಯಕನ ಸ್ಥಾನದಲ್ಲಿ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳಲು ಪವಾರ್ ಈಗಲೇ ತಾಲೀಮು ನಡೆಸುತ್ತಿದ್ದಾರೆ.

ಶಿವಸೇನೆಯಿಂದ ಹಿಡಿದು ಕಮ್ಯುನಿಸ್ಟರ ವರೆಗೆ ಎಲ್ಲ ಪಕ್ಷಗಳ ನಾಯಕರ ಜತೆಯಲ್ಲಿಯೂ ಸೌಹಾರ್ದಯುತ ಸಂಬಂಧ ಉಳಿಸಿಕೊಂಡು ಬಂದಿರುವ ತನ್ನ ಅಜಾತಶತ್ರುವಿನ ವ್ಯಕ್ತಿತ್ವ ಜೀವಮಾನದ ಆಸೆಯನ್ನು ಈಡೇರಿಸಿಕೊಳ್ಳಲು ನೆರವಾಗಬಹುದು ಎಂದು ಅವರು ನಂಬಿದಂತಿದೆ. ರಾಜಕಾರಣಿಗಳ ಮನೆಮುಂದೆ ಸದಾ ಜೀನು ಹೊದ್ದುಕೊಂಡು ನಿಂತಿರುವ ಆಸೆಯ ಕುದುರೆ ಪವಾರ್ ಅವರನ್ನು ಕರೆಯುತ್ತಿದೆ.

Monday, July 16, 2012

ಪಾತ್ರಧಾರಿಗಳನ್ನಷ್ಟೇ ಅಲ್ಲ, ಸೂತ್ರಧಾರರನ್ನೂ ನೋಡಿ July 16, 2012

ಕರ್ನಾಟಕದಲ್ಲಿ ಬಿಜೆಪಿ ರಾಜಕಾರಣ ತಲುಪಿರುವ ಅಧೋಗತಿಗೆ ಹೊಣೆಗಾರರು ಯಾರು ಎಂಬ ಪ್ರಶ್ನೆ ಕೇಳಿದರೆ ಜನ ಪೈಪೋಟಿಯಿಂದ ಹೆಸರುಗಳನ್ನು ಪಟ್ಟಿಮಾಡಿ ಹೇಳಬಲ್ಲರು. ಬಿ.ಎಸ್.ಯಡಿಯೂರಪ್ಪ, ಬಳ್ಳಾರಿಯ ರೆಡ್ಡಿ ಸೋದರರು, ಪಕ್ಷಾಂತರಿ ಶಾಸಕರು,ಅನಂತಕುಮಾರ್, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ..... ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. 

ಇವರೆಲ್ಲ ತೆರೆಯ ಮುಂದೆ ಕಾಣುತ್ತಿರುವ ಪಾತ್ರಧಾರಿಗಳು. ಇವರ ಹೆಸರೆತ್ತಿ ಮನಸಾರೆ ಬೈದುಬಿಡಬಹುದು, ಸ್ವಲ್ಪ ಧೈರ್ಯಮಾಡಿದರೆ ಕಲ್ಲೆತ್ತಿ ಹೊಡೆಯಲೂಬಹುದು. ಅಂತಹ ಸಾಹಸ ಮಾಡುವ ಧೈರ್ಯ ಇಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಇವರನ್ನು ಮಣ್ಣುಮುಕ್ಕಿಸಿ ಸೇಡು ತೀರಿಸಿಕೊಳ್ಳಬಹುದು. 

ಆದರೆ ನೇಪಥ್ಯದಲ್ಲಿ ಕೂತು ಈ ಪಾತ್ರಗಳನ್ನು ಆಡಿಸುತ್ತಿರುವ ಸೂತ್ರಧಾರರನ್ನು ಏನು ಮಾಡುವುದು? ಇವರು ಯಾರ ಕಣ್ಣಿಗೂ ಕಾಣುವುದಿಲ್ಲ, ಇವರ ಅಂತರಂಗದ ಪಿಸುಮಾತುಗಳು ಹೊರಗಿರುವ ಯಾರಿಗೂ ಕೇಳಿಸುತ್ತಿಲ್ಲ, ಇವರು ವಿಧಾನಸಭೆ ಪ್ರವೇಶಿಸದೆಯೂ ಅಧಿಕಾರವನ್ನು ಅನುಭವಿಸಬಲ್ಲರು, ಜಾತಿವಾದಿ ಎಂದು ಕರೆಸಿಕೊಳ್ಳದೆಯೇ ಜಾತಿಯ ರಾಜಕಾರಣ ಮಾಡಬಲ್ಲರು, ಭ್ರಷ್ಟರನ್ನು ಪೋಷಿಸುತ್ತಲೇ ಪ್ರಾಮಾಣಿಕರು ಎಂಬ ಹಣೆಪಟ್ಟಿ ಹಚ್ಚಿಕೊಂಡು ಓಡಾಡಬಲ್ಲರು.
 
ಇವರನ್ನು ಕಾಣಬೇಕಾದರೆ ಸಂಘ ಪರಿವಾರದ ಗರ್ಭಗುಡಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಕ್ಕೆ ಪ್ರವೇಶಿಸಬೇಕು. ಸಂಘ ಪರಿವಾರದ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ತನ್ನನ್ನು ಸಾಂಸ್ಕೃತಿಕ ಸಂಘಟನೆ ಎಂದು ಕರೆಸಿಕೊಂಡರೂ ಸಂಸ್ಕೃತಿಯೇತರ ಚಟುವಟಿಕೆಗಳಿಗಾಗಿ ಅದು ಹಲವಾರು ಅಂಗಸಂಸ್ಥೆಗಳನ್ನು ಹುಟ್ಟುಹಾಕಿದೆ.
 
ರಾಜಕೀಯಕ್ಕಾಗಿ ಬಿಜೆಪಿ (ಮೊದಲು ಜನಸಂಘ), ಧರ್ಮಕ್ಕಾಗಿ ವಿಎಚ್‌ಪಿ, ಹಿಂದೂ ಜಾಗರಣ ಮಂಚ, ಬಜರಂಗದಳ ಇತ್ಯಾದಿ,  ವಿದ್ಯಾರ್ಥಿಗಳಿಗಾಗಿ ಎಬಿವಿಪಿ, ಕಾರ್ಮಿಕರಿಗಾಗಿ ಬಿಎಂಎಸ್...ಹೀಗೆ ತರಹೇವಾರಿ ಸಂಘಟನೆಗಳು. ಇದರ ಜತೆಗೆ ನೂರಾರು ಸ್ವಯಂಸೇವಾ ಸಂಸ್ಥೆಗಳು. 

ಈ ಎಲ್ಲ ಅಂಗಸಂಸ್ಥೆಗಳ ಯಜಮಾನನ ಸ್ಥಾನದಲ್ಲಿ ಕೂತಿರುವುದು ಆರ್‌ಎಸ್‌ಎಸ್, ಒಂದು ರೀತಿಯಲ್ಲಿ ಇದು ಪರಿವಾರದ ಹೈಕಮಾಂಡ್. ಪರಿವಾರಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿರ್ಧಾರಗಳು ಇತ್ಯರ್ಥವಾಗುವುದು ಇದೇ ಗರ್ಭಗುಡಿಯಲ್ಲಿ. ಇದು ತನ್ನ ಆದೇಶಗಳನ್ನು ಪತ್ರಿಕಾಗೋಷ್ಠಿ ಕರೆದು ಇಲ್ಲವೇ ಪತ್ರಿಕಾ ಹೇಳಿಕೆಗಳ ಮೂಲಕ ಜಾರಿಗೊಳಿಸುವುದಿಲ್ಲ. 

ಅದೇನಿದ್ದರೂ ಕಣ್ಸನ್ನೆ, ಕೈಸನ್ನೆಯ  ಮೂಲಕವೇ ನಡೆಯುತ್ತದೆ. ಈ ಸಂಘಟನೆಯಲ್ಲಿ ಪ್ರಾಮಾಣಿಕತೆ, ತ್ಯಾಗ, ಸಾರ್ವಜನಿಕ ಸೇವೆ ಮತ್ತು ಸರಳ-ಶಿಸ್ತುಬದ್ಧ ಜೀವನಕ್ಕೆ ಅರ್ಪಿಸಿಕೊಂಡ ಅನೇಕ ಹಿರಿಯ ಜೀವಗಳಿದ್ದವು. ಆರ್‌ಎಸ್‌ಎಸ್ ಜತೆಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಇಟ್ಟುಕೊಂಡವರು ಕೂಡಾ ವೈಯಕ್ತಿಕವಾಗಿ ಅವರಿಗೆ ಗೌರವದಿಂದ ತಲೆಬಾಗುತ್ತಿದ್ದರು. 

ಆದರೆ ಇಂದಿನ ಆರ್‌ಎಸ್‌ಎಸ್‌ನಲ್ಲಿ ಹಳೆಯ ತಲೆಮಾರಿನ ನಾಯಕರು ಪಳೆಯುಳಿಕೆಯಂತೆ ಅಲ್ಲಲ್ಲಿ ಕಾಣುತ್ತಿದ್ದಾರೆಯೇ ಹೊರತು ಬಹುಸಂಖ್ಯಾತ ನಾಯಕರು ಬೇರೆ ದಾರಿ ಹಿಡಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಆರ್‌ಎಸ್‌ಎಸ್ ತನ್ನ ಮೂಲ ಕ್ಷೇತ್ರಗಳಾದ ಧರ್ಮ ಮತ್ತು ಸಂಸ್ಕೃತಿಯನ್ನು ಪಕ್ಕಕ್ಕಿಟ್ಟು ರಾಜಕೀಯ ಕ್ಷೇತ್ರದಲ್ಲಿ ತೋರುತ್ತಿರುವ ಅತಿಯಾದ ಆಸಕ್ತಿ. 

1925ರಲ್ಲಿ ಸ್ಥಾಪನೆಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘ 1949ರಲ್ಲಿ ಒಪ್ಪಿಕೊಂಡ ಲಿಖಿತ ಸಂವಿಧಾನದ ಪ್ರಕಾರ ನೇರವಾಗಿ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ.  `ಹಿಂದೂ `ಸಮಾಜ`ದೊಳಗಿನ ವಿಭಿನ್ನ ಗುಂಪುಗಳನ್ನು ಸಂಘಟಿಸುವುದು ಮತ್ತು ಅದನ್ನು `ಧರ್ಮ` ಮತ್ತು ಸಂಸ್ಕೃತಿಯ ಆಧಾರದಲ್ಲಿ ಪುನರುಜ್ಚೀವನಗೊಳಿಸಿ ಆ ಮೂಲಕ `ಭರತವರ್ಷ`ದ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸುವುದು ಸಂಘದ ಗುರಿ ಮತ್ತು ಉದ್ದೇಶ...` ಎಂದು ಆರ್‌ಎಸ್‌ಎಸ್ ಒಪ್ಪಿಕೊಂಡಿರುವ ಸಂವಿಧಾನದ ಮೂರನೆ ಪರಿಚ್ಛೇದ ಹೇಳುತ್ತದೆ. 

`ಸಂಘಕ್ಕೆ ರಾಜಕೀಯ ಉದ್ದೇಶ ಇಲ್ಲ, ಇದು ಶುದ್ಧವಾಗಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬದ್ಧವಾದ ಸಂಸ್ಥೆ` ಎಂದು ಪರಿಚ್ಛೇದ 4ರಲ್ಲಿ ಉದ್ದೇಶವನ್ನು ಇನ್ನಷ್ಟು ಸ್ಪಷ್ಟಪಡಿಸಲಾಗಿದೆ. ಇಷ್ಟು ಹೇಳಿದ ನಂತರ ಮುಂದುವರಿಯುತ್ತಾ `...ಸಂಘದ ಸದಸ್ಯರು ರಾಜಕೀಯ ಪಕ್ಷ ಸೇರುವುದಕ್ಕೆ ಅಭ್ಯಂತರ ಇಲ್ಲ...ಮುಂದೊಂದು ದಿನ ರಾಜಕೀಯ ಪಕ್ಷವಾಗಿ ಪರಿವರ್ತನೆಗೊಳ್ಳಲು ಆರ್‌ಎಸ್‌ಎಸ್ ಸ್ವತಂತ್ರವಾಗಿದೆ` (ಪ್ಯಾರಾ 18 ಮತ್ತು 19) ಎಂದು ಹೇಳಿ ಆರ್‌ಎಸ್‌ಎಸ್ ತನ್ನ ಸಂವಿಧಾನದಲ್ಲಿಯೇ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದೆ. ಈ ದ್ವಂದ್ವವನ್ನು ಆರ್‌ಎಸ್‌ಎಸ್ ಇತಿಹಾಸದುದ್ದಕ್ಕೂ ಅದರ ನಡವಳಿಕೆಯಲ್ಲಿ ಕಾಣಬಹುದು.

 ಸಂವಿಧಾನದಲ್ಲಿ ಅವಕಾಶ ಇರುವಂತೆ ಆರ್‌ಎಸ್‌ಎಸ್ ನೇರವಾಗಿ ರಾಜಕೀಯ ಪಕ್ಷವಾಗಿ ಪರಿವರ್ತನೆಗೊಳ್ಳಲಿಲ್ಲ, ಬದಲಿಗೆ 1951ರಲ್ಲಿ ಜನಸಂಘ ಎಂಬ ರಾಜಕೀಯ ಪಕ್ಷವನ್ನು ಹುಟ್ಟುಹಾಕಿತು. ಇದರ ನಂತರವೂ ಹಿಂದಿನ ಜನಸಂಘ ಇಲ್ಲವೇ ಈಗಿನ ಬಿಜೆಪಿ ತಮ್ಮ  ನಿಯಂತ್ರಣಕ್ಕೆ ಒಳಪಟ್ಟಿದೆ ಎಂದು ಅದು ಒಪ್ಪಿಕೊಳ್ಳುವುದಿಲ್ಲ.

  ಆದರೆ ವಾಜಪೇಯಿ-ಅಡ್ವಾಣಿಯವರಿಂದ ಹಿಡಿದು ಯಡಿಯೂರಪ್ಪ-ಶೆಟ್ಟರ್ ವರೆಗೆ ಎಲ್ಲರೂ ಆರ್‌ಎಸ್‌ಎಸ್‌ನಿಂದಲೇ ಬಂದವರು ಮತ್ತು ಅದಕ್ಕೆ ನಿಷ್ಠರಾಗಿರುವವರು. ಬಿಜೆಪಿಯ ಸಂಘಟನೆಯಲ್ಲಿ ಮಾತ್ರ ಆರ್‌ಎಸ್‌ಎಸ್‌ನಿಂದ ಎರವಲು ಸೇವೆಯ ರೂಪದಲ್ಲಿ ಬಂದ ಸ್ವಯಂಸೇವಕರಿರುತ್ತಾರೆ. 

ಬಿಜೆಪಿಯನ್ನು ಹೊರತುಪಡಿಸಿ ಬೇರೆ ಯಾವ ರಾಜಕೀಯ ಪಕ್ಷದಲ್ಲಿಯೂ ಆರ್‌ಎಸ್‌ಎಸ್ ಜತೆ ತನ್ನನ್ನು ಗುರುತಿಸಿಕೊಳ್ಳುವ ನಾಯಕರಿಲ್ಲ. ಇದೇ ರೀತಿ ಬೇರೆ ರಾಜಕೀಯ ಪಕ್ಷಗಳಿಗೆ ಸೇರಿದ ಯಾವ ನಾಯಕರನ್ನೂ ಕೂಡಾ ಆರ್‌ಎಸ್‌ಎಸ್ `ನಮ್ಮವನು` ಎಂದು ಒಪ್ಪಿಕೊಳ್ಳುವುದೂ ಇಲ್ಲ.

ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂದರೆ ಬೇರೆಬೇರೆ ಅಲ್ಲ, ಅದು ಒಂದೇ ನಾಣ್ಯದ ಎರಡು ಮುಖಗಳು. ಹೀಗಿರುವಾಗ ಬಿಜೆಪಿಯ ಎಲ್ಲ ಒಳ್ಳೆಯ ಮತ್ತು ಕೆಟ್ಟ ನಡವಳಿಕೆಗಳಿಗೆ ಆರ್‌ಎಸ್‌ಎಸ್ ಕೂಡಾ ಹೊಣೆ. 

ಈ ಜವಾಬ್ದಾರಿಯಿಂದ ಅದು ನುಣುಚಿಕೊಳ್ಳಲಾಗುವುದಿಲ್ಲ. ಹೊಲಸು ರಾಜಕಾರಣದ ಮೂಲಕ ಗಳಿಸುವ ರಾಜಕೀಯ ಅಧಿಕಾರ ಬೇಕು, ಆದರೆ ಅದರ ನೈತಿಕ ಹೊಣೆಗಾರಿಕೆ ಬೇಡ ಎನ್ನುವುದು ಆರ್‌ಎಸ್‌ಎಸ್‌ನ ಆತ್ಮವಂಚನೆಯ ಮುಖವನ್ನಷ್ಟೇ ಅನಾವರಣಗೊಳಿಸುತ್ತದೆ. ದೇಶದ ಎದುರು ರಾಜ್ಯದ ಜನತೆ ತಲೆತಗ್ಗಿಸಬೇಕಾಗಿ ಬಂದಿರುವ ಇಂದಿನ ನೀತಿಭ್ರಷ್ಟ ರಾಜಕಾರಣದ ಮೂಲ `ಆಪರೇಷನ್ ಕಮಲ` ಎಂಬ ಅನೈತಿಕ ರಾಜಕಾರಣದಲ್ಲಿದೆ.
 
ಶಾಖೆಗಳಲ್ಲಿ ಸೇರುವ ಸ್ವಯಂಸೇವಕರಿಗೆ ಪ್ರಾಮಾಣಿಕತೆಯ ಪಾಠ ಹೇಳುವ ಆರ್‌ಎಸ್‌ಎಸ್ ನಾಯಕರಿಂದ ಇದನ್ನು ತಡೆಯಲು ಸಾಧ್ಯ ಇರಲಿಲ್ಲವೇ? ಈ ರೀತಿಯ ಮಾರ್ಗದರ್ಶನ ನೀಡಲಿಕ್ಕಾಗಿಯೇ ಅಲ್ಲವೇ, ಸಂಘ ತನ್ನ ಪ್ರತಿನಿಧಿಯನ್ನು ಪಕ್ಷದ ಸಂಘಟನೆಗೆ ಎರವಲು ಸೇವೆ ಮೂಲಕ ಕಳುಹಿಸುವುದು. 

ಇಷ್ಟೆಲ್ಲ ಅವಾಂತರಗಳು ನಡೆಯುತ್ತಿದ್ದಾಗ ಸಂಘಟನಾ ಕಾರ್ಯದರ್ಶಿ ಎಂಬ ಆ ಮಹಾನುಭಾವರು ಏನು ಮಾಡುತ್ತಿದ್ದರು? ದೇಶ ಭಕ್ತಿ ಎಂದರೆ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಮಾಡಿ, ಮುಸ್ಲಿಮರ ವಿರುದ್ಧ ಘೋಷಣೆ ಕೂಗುವುದು ಮಾತ್ರವೇ? ಸತ್ಯ, ನ್ಯಾಯ ಮತ್ತು ಪ್ರಾಮಾಣಿಕತೆಯ ಹಾದಿಯಲ್ಲಿ ನಡೆಯುವುದು ಕೂಡಾ ದೇಶಭಕ್ತಿ ಅಲ್ಲವೇ?

ವಿಚಿತ್ರವೆಂದರೆ ಸಚ್ಚಾರಿತ್ರ್ಯ ಮತ್ತು ಮೌಲ್ಯಾಧರಿತ ರಾಜಕಾರಣದ ಬಗ್ಗೆ ಉಪನ್ಯಾಸ ನೀಡುವ ಆರ್‌ಎಸ್‌ಎಸ್ ನಾಯಕರಿಗೆ ಈಗ ಜೈಲಲ್ಲಿರುವ ಜನಾರ್ದನ ರೆಡ್ಡಿ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡಾಗ ಯಾವ ಮುಜುಗರವೂ ಆಗಲಿಲ್ಲ.  ತಾವು ಖಾಸಗಿಯಾಗಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳಿಗೆ ಬಳ್ಳಾರಿಯ ಗಣಿಲೂಟಿಕೋರರಿಂದ  ಕೈತುಂಬಾ ದೇಣಿಗೆ ಪಡೆಯುತ್ತಿದ್ದಾಗ ಸಂಘದ ನಾಯಕರಿಗೆ ಯಾವ ಆತ್ಮಸಾಕ್ಷಿಯೂ  ಕಾಡಲಿಲ್ಲ.
 
ಯಡಿಯೂರಪ್ಪ ಒಬ್ಬ ರಾಜಕಾರಣಿ, ಅಡ್ಡಮಾರ್ಗದಿಂದ ಗಳಿಸಿದ ಹಣವನ್ನು ದೇಣಿಗೆ ಪಡೆದು ಅವರು ರಾಜಕಾರಣ ಮಾಡಿದಾಗ  ತಪ್ಪು ಎಂದು ಹೇಳಬಹುದು, ಆದರೆ ಅಸಹಜ ಎಂದು ಹೇಳಲಾಗುವುದಿಲ್ಲ. ಆದರೆ ಆರ್‌ಎಸ್‌ಎಸ್? ತನ್ನ ಆರು ಅಂಗ ಸಂಸ್ಥೆಗಳು ಮತ್ತು ಮತ್ತು ಏಳು ಮಂದಿ ನಾಯಕರಿಗೆ ಯಡಿಯೂರಪ್ಪ ಸರ್ಕಾರ ಅಂದಾಜು 50 ಕೋಟಿ ರೂಪಾಯಿ ಬೆಲೆಬಾಳುವ ಜಮೀನನ್ನು ನೀಡಿದೆ ಎಂಬ ಆರೋಪವನ್ನು ಆರ್‌ಎಸ್‌ಎಸ್ ನಿರಾಕರಿಸುವ ಸ್ಥಿತಿಯಲ್ಲಿದೆಯೇ? ಇದು ಅನೈತಿಕ ಎಂದು ಅನಿಸಲಿಲ್ಲವೇ? 

ವಾಸ್ತವ ಸಂಗತಿ ಏನೆಂದರೆ ಆರ್‌ಎಸ್‌ಎಸ್‌ಗೆ ಕೂಡಾ ರಾಜಕೀಯ ಅಧಿಕಾರ ಬೇಕು ಮತ್ತು ಅದರ ಮೂಲಕ ಸುಲಭದಲ್ಲಿ ಬರುವ  ಸುಖ-ಸಂತೋಷಗಳನ್ನು ಅನುಭವಿಸಬೇಕು. 

ತನ್ನ ಮಾತಿಗೆ ಗೋಣು ಆಡಿಸುವ ನಾಯಕರನ್ನಷ್ಟೇ ಅದು ಸಹಿಸಿಕೊಳ್ಳುತ್ತದೆ, ನಿರಾಕರಿಸಿದರೆ ಅದು ವಾಜಪೇಯಿ-ಅಡ್ವಾಣಿ ಇರಲಿ, ಯಡಿಯೂರಪ್ಪ - ಸದಾನಂದಗೌಡರಿರಲಿ ಯಾರ ಗೋಣು ಮುರಿಯಲೂ ಹಿಂದೆಮುಂದೆ ನೋಡುವುದಿಲ್ಲ. ಯಡಿಯೂರಪ್ಪನವರ ಪದಚ್ಯುತಿಗೆ ಆರ್‌ಎಸ್‌ಎಸ್ ಒತ್ತಡ ಹೇರಲು ಭ್ರಷ್ಟಾಚಾರದ ಆರೋಪಗಳಷ್ಟೇ ಕಾರಣ ಅಲ್ಲ, ರಾಜ್ಯದ ಒಂದು ಪ್ರಬಲ ಕೋಮಿಗೆ ಸೇರಿದ ನಾಯಕನೊಬ್ಬ ತಮ್ಮ ನಿಯಂತ್ರಣವನ್ನು ಮೀರಿ ಬೆಳೆಯುತ್ತಿದ್ದಾರೆ ಎಂಬ ಅಸುರಕ್ಷತೆಯೂ ಕಾರಣ. 

ಅದೇ ರೀತಿ ಯಡಿಯೂರಪ್ಪನವರು ಸದಾನಂದಗೌಡರ ತಲೆದಂಡ ಕೇಳಿದ್ದನ್ನು ಬೆಂಬಲಿಸಲು  ಗೌಡರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುತ್ತಿಲ್ಲ ಎನ್ನುವ ಅಸಮಾಧಾನವೂ ಕಾರಣ. 

ಇಲ್ಲದೆ ಇದ್ದರೆ  ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯದ ಜನತೆ ಪಕ್ಷಭೇಧ ಮರೆತು ಸಜ್ಜನ, ಪ್ರಾಮಾಣಿಕ ಎಂದು ಕೊಂಡಾಡುತ್ತಿದ್ದ ಮುಖ್ಯಮಂತ್ರಿಯ ಬದಲಾವಣೆಗೆ ಆರ್‌ಎಸ್‌ಎಸ್ ಒಪ್ಪಿಕೊಳ್ಳಲು ಹೇಗೆ ಸಾಧ್ಯ? ಗೌಡರು ಶಾಖೆಗಳಲ್ಲಿ ಹೇಳಿಕೊಟ್ಟಿದ್ದ ಪಾಠಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾ ಬಂದರೂ ಆರ್‌ಎಸ್‌ಎಸ್ ಯಾಕೆ ಅವರ ಕೈಬಿಟ್ಟಿತು? ಉಳಿದೆಲ್ಲ ಕಳಂಕಿತ ಕಡತಗಳ ಜತೆಯಲ್ಲಿ ಆರ್‌ಎಸ್‌ಎಸ್ ನಾಯಕರ ಶಿಫಾರಸನ್ನೊಳಗೊಂಡ ಕಡತಗಳನ್ನೂ ಗೌಡರು ಪಕ್ಕಕ್ಕೆ ತೆಗೆದಿಟ್ಟರೇ? ಈಗಿನ ಆರ್‌ಎಸ್‌ಎಸ್ ಅಖಂಡ ಹಿಂದುತ್ವಕ್ಕೆ ಅರ್ಪಿಸಿಕೊಂಡ ಸಂಸ್ಥೆಯಾಗಿ ಉಳಿದಿಲ್ಲ. 

ಅಲ್ಲಿಯೂ ಜಾತಿ, ಪ್ರಾದೇಶಿಕತೆ, ಸ್ವಾರ್ಥ, ದ್ವೇಷ, ಅಸೂಯೆಗಳಿವೆ. ಮುಖ್ಯಮಂತ್ರಿ ಕುರ್ಚಿಯಿಂದ ಯಡಿಯೂರಪ್ಪನವರು ಇಳಿದದ್ದು, ಗೌಡರು ಹತ್ತಿದ್ದು, ಈಗ ಗೌಡರು ಇಳಿದು ಶೆಟ್ಟರ್ ಹತ್ತಿದ್ದು ಹೊರನೋಟಕ್ಕೆ ಕಾಣುವಷ್ಟು ಸುಲಭದಲ್ಲಿ ನಡೆದಿಲ್ಲ. ಇದರ ಹಿಂದೆ ಸೂತ್ರಹಿಡಿದು ಆಡಿಸುತ್ತಿರುವವರು  ಮೈ.ಚ.ಜಯದೇವ, ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು  ದತ್ತಾತ್ರೇಯ ಹೊಸಬಾಳೆ ಎಂಬ ಆರ್‌ಎಸ್‌ಎಸ್‌ನ ಮೂವರು ಪ್ರಮುಖ ನಾಯಕರು. ಇವರಲ್ಲಿ ಅತ್ಯಂತ ವಿವಾದಾತ್ಮಕ ನಾಯಕರಾದ ಪ್ರಭಾಕರ ಭಟ್ಟರು ಈಗ ಕುಂದಾಪುರದ ಸಜ್ಜನ ಶಾಸಕ ಹಾಲಾಡಿ ಶ್ರಿನಿವಾಸ ಶೆಟ್ಟಿಯವರ ಸಾತ್ವಿಕ ಸಿಟ್ಟಿಗೆ ಈಡಾಗಿದ್ದಾರೆ.

ರಾಜ್ಯದಂತೆ ಕೇಂದ್ರದಲ್ಲಿಯೂ ಈ ಅಧಿಕಾರದ ಆಟ ಸಾಗಿದೆ.  ವಾಜಪೇಯಿ-ಅಡ್ವಾಣಿಯವರಂತಹ ಹಿರಿಯ ಮತ್ತು ಜನಪ್ರಿಯ ನಾಯಕರಿದ್ದಾಗ ಬಾಲ ಮುದುಡಿಕೊಂಡಿದ್ದ ಆರ್‌ಎಸ್‌ಎಸ್ ಅವರು ನೇಪಥ್ಯಕ್ಕೆ ಸರಿಯುತ್ತಿದ್ದಂತೆಯೇ ಇಡೀ ಪಕ್ಷವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಬಿಟ್ಟಿದೆ. 

ಎಲ್.ಕೆ.ಅಡ್ವಾಣಿಯವರಂತಹ  ಹಿರಿಯ ನಾಯಕನ ವಿರುದ್ಧ ನಿತಿನ್ ಗಡ್ಕರಿಯವರಂತಹ ಯಃಕಶ್ಚಿತ್ ನಾಯಕನನ್ನು ಎತ್ತಿಕಟ್ಟಿದೆ. ನರೇಂದ್ರಮೋದಿಯವರನ್ನು ಮಣಿಸಲು ಹೋಗಿ ಸಾಧ್ಯವಾಗದೆ ಸದ್ಯಕ್ಕೆ ಅವರಿಗೆ ಶರಣಾಗಿದೆ. 

ಹೇಳುವವರು-ಕೇಳುವವರು ಇಲ್ಲದ ಪುಂಡುಪೋಕರಿಯಂತೆ ಬಿಜೆಪಿ ಬೆಳೆಯಲು ದುರ್ಬಲ ಹೈಕಮಾಂಡ್ ಕಾರಣ ಎಂಬ ಆರೋಪ ಪಕ್ಷದ ಒಳಗೆ ಮತ್ತು ಹೊರಗೆ ಕೇಳಿಬರುತ್ತಿದೆ. ಅದು ದುರ್ಬಲಗೊಳ್ಳಲು ಮುಖ್ಯ ಕಾರಣ- ಪರ್ಯಾಯ ಹೈಕಮಾಂಡ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಇದು ರಾಜಕೀಯ ರಂಗಸ್ಥಳದ ನೇಪಥ್ಯದಲ್ಲಿ  ಸೂತ್ರ ಹಿಡಿದುಕೊಂಡು ನಿಂತಿದೆ. ನಾಟಕ ಕೆಟ್ಟರೆ ಪಾತ್ರಧಾರಿಗಳಿಗೆ ಜನ ಕಲ್ಲು ಹೊಡೆಯುತ್ತಾರೆ, ಮರೆಯಲ್ಲಿ ನಿಂತ ಸೂತ್ರಧಾರರು ಸುರಕ್ಷಿತ

ಇದು ಬಿಜೆಪಿ ಬಿಕ್ಕಟ್ಟಿನ ಅಂತ್ಯ ಅಲ್ಲ, ಆರಂಭ July 09, 2012


ದಿನಾಂಕ: ಜೂನ್ 2, 2008, ಸ್ಥಳ: ದೆಹಲಿಯ  `26, ತುಘಲಕ್ ಕ್ರೆಸೆಂಟ್`ನಲ್ಲಿರುವ ಲೋಕಸಭಾ ಸದಸ್ಯ ಅನಂತಕುಮಾರ್ ಮನೆ. ಕರ್ನಾಟಕದಲ್ಲಿ ಬಿಜೆಪಿಯ ವಿಜಯೋತ್ಸವದ ಕಾವು ಇನ್ನೂ ಆರಿರಲಿಲ್ಲ, ಆಗಲೇ ಭಿನ್ನಮತದ ಕಿಡಿ ಹಾರಿತ್ತು.

`ಜಗದೀಶ್ ಶೆಟ್ಟರ್ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳುವುದಿಲ್ಲ` ಎಂದು ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದಿದ್ದರು,  `ಸಚಿವನನ್ನಾಗಿ ಮಾಡಿದರೆ ಸರಿ, ವಿಧಾನಸಭಾ ಅಧ್ಯಕ್ಷ ಖಂಡಿತ ಆಗಲಾರೆ` ಎಂದು ಶೆಟ್ಟರ್ ಹಟ ಹಿಡಿದು ಕೂತಿದ್ದರು.

ಅನಂತ ಕುಮಾರ್‌ಮನೆಯಲ್ಲಿ  ಆ ದಿನ ಸಂಜೆ ಶೆಟ್ಟರ್ ಹೆಚ್ಚುಕಡಿಮೆ `ಗೃಹಬಂಧನ`ದಲ್ಲಿದ್ದರು. ಅಲ್ಲಿದ್ದ ಇತರರೆಂದರೆ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಜೇಟ್ಲಿ, ಥಿಂಕ್‌ಟ್ಯಾಂಕ್ ಸದಸ್ಯ ವಾಮನಾಚಾರ್ ಮತ್ತು ಸಂಸದ ಪ್ರಹ್ಲಾದ ಜೋಷಿ. ಮಧ್ಯಾಹ್ನವೇ ಎಲ್.ಕೆ.ಅಡ್ವಾಣಿ ಮನೆಯಲ್ಲಿ ಒಂದು ಸುತ್ತಿನ ಮಾತುಕತೆ ನಡೆದಿತ್ತು.

ಸಂಜೆಯ ಮಾತುಕತೆಯ ಫಲಿತಾಂಶ ತಿಳಿಯಲು ಗೇಟ್ ಬಳಿ ಕಾಯುತ್ತಿದ್ದ ಪತ್ರಕರ್ತರ ಒತ್ತಾಯಕ್ಕೆ ಮಣಿದು ಹೊರ ಬಂದ ಶೆಟ್ಟರ್ ಅವರ ಕಳಾಹೀನ ಮುಖವೇ ಒಳಗೆ ನಡೆಯುತ್ತಿದ್ದುದನ್ನು ಹೇಳಿತ್ತು. `ಎಲ್ಲವೂ ಪಕ್ಷದ ಹಿರಿಯ ನಾಯಕರ ಕೈಯಲ್ಲಿದೆ, ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ` ಎಂದು ಚುಟುಕಾಗಿ ಪ್ರತಿಕ್ರಿಯಿಸಿ  ಮರುಪ್ರಶ್ನೆಗೂ ಕಿವಿಗೊಡದೆ ಅವರು ಮನೆಯೊಳಗೆ ಹೋಗಿ ಸೇರಿಕೊಂಡಿದ್ದರು.

ಮಧ್ಯರಾತ್ರಿ ಹೊತ್ತಿಗೆ ನನಗೆ ಪೋನ್‌ಗೆ ಸಿಕ್ಕ ಶೆಟ್ಟರ್ `ಪಕ್ಷದ ವರಿಷ್ಠರ ಆದೇಶಕ್ಕೆ ತಲೆಬಾಗಿದ್ದೇನೆ` ಎಂದಷ್ಟೇ ಹೇಳಿ ಮಾತು ಮುಗಿಸಲು ಪ್ರಯತ್ನಿಸಿದ್ದರು. ಇನ್ನಷ್ಟು ಕಾಡಿದಾಗ ಕಳೆದೆರಡು ವರ್ಷಗಳಲ್ಲಿ ತಮಗೆ ಆಗಿರುವ ಅನ್ಯಾಯ-ಅವಮಾನಗಳ ವಿವರಗಳನ್ನೆಲ್ಲ ಬಿಚ್ಚಿಟ್ಟಿದ್ದರು. ಯಡಿಯೂರಪ್ಪನವರು ವಿಶೇಷ ಆಸಕ್ತಿ ವಹಿಸಿ ಜೆಡಿ (ಯು)ನಲ್ಲಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡದ್ದು ಮಾತ್ರವಲ್ಲ ಮೊದಲ ಕಂತಿನಲ್ಲಿಯೇ ಅವರನ್ನು ಸಚಿವರನ್ನಾಗಿ ಮಾಡಿದ್ದು ಶೆಟ್ಟರ್ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿತ್ತು. ಹುಬ್ಬಳ್ಳಿ-ಧಾರವಾಡದ ಭಾಗದಲ್ಲಿ  ಪ್ರತಿಸ್ಪರ್ಧಿಯೊಬ್ಬನನ್ನು ಹುಟ್ಟುಹಾಕಿ ತಮ್ಮ ವರ್ಚಸ್ಸನ್ನು ಕುಂದಿಸುವ ದುರುದ್ದೇಶದಿಂದಲೇ ಹೀಗೆ  ಮಾಡಲಾಗಿದೆ ಎಂದು ಅವರು ತಿಳಿದುಕೊಂಡಿದ್ದರು. `ಅವರೇ (ಯಡಿಯೂರಪ್ಪ) ಲೀಡರ್, ನಾನಲ್ಲ.

ಅದನ್ನು ನಾನು ಮಾತ್ರವಲ್ಲ ರಾಜ್ಯದ ಮತದಾರರು ಒಪ್ಪಿಕೊಂಡಿದ್ದಾರೆ.  ಹೀಗಿದ್ದರೂ ನನ್ನ ಮೇಲೆ ಯಾಕೆ ದ್ವೇಷ ಸಾಧಿಸುತ್ತಾರೋ? ಅವರಿಗೆ ಯಾಕೆ ಇಷ್ಟೊಂದು `ಇನ್‌ಸೆಕ್ಯುರಿಟಿ`ಯೋ ಗೊತ್ತಿಲ್ಲ` ಎಂದು ಅವರು ನೋವಿನಿಂದ ಹೇಳಿದ್ದರು. ಅದರ ನಂತರ ನಡೆದುದೆಲ್ಲವೂ ಈಗ ಇತಿಹಾಸ.

ಆ ನಾಟಕೀಯ ವಿದ್ಯಮಾನ ನಡೆದು ಸರಿಯಾಗಿ ನಾಲ್ಕುವರ್ಷಗಳು ಕಳೆದಿವೆ. ಇತಿಹಾಸದ ಚಕ್ರ ಈಗ  ಸುತ್ತು ಪೂರ್ಣಗೊಳಿಸಿದೆ. ಅದೇ ಅನಂತಕುಮಾರ್ ಮನೆಯ `ರಂಗಸ್ಥಳ` ಮತ್ತು ಹೆಚ್ಚುಕಡಿಮೆ ಅದೇ ಪಾತ್ರಧಾರಿಗಳು. ಆದರೆ ನಾಟಕದ ಕತೆ ಮಾತ್ರ ಸಂಪೂರ್ಣ ತದ್ವಿರುದ್ಧ. ಶೆಟ್ಟರ್ ಅವರನ್ನು ಸಂಪುಟಕ್ಕೂ ಸೇರಿಸಬಾರದೆಂದು ರಚ್ಚೆಹಿಡಿದು ಕೂತಿದ್ದ ಯಡಿಯೂರಪ್ಪನವರು  ಅವರನ್ನು ಮುಖ್ಯಮಂತ್ರಿ ಮಾಡಲೇ ಬೇಕೆಂಬ  ಜಿದ್ದಾಜಿದ್ದಿ ನಡೆಸಿ ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ತನ್ನ `ದೇವಪಿತ` (ಗಾಡ್‌ಫಾದರ್)ನಂತೆ ಅವತರಿಸಿರುವ ಯಡಿಯೂರಪ್ಪನವರ ಬಗ್ಗೆ ಶೆಟ್ಟರ್ ಮನಸ್ಸಲ್ಲಿ ಈಗ ಏನಿದೆ ಎನ್ನುವುದು ಗೊತ್ತಿಲ್ಲ. ಈ ಇತಿಹಾಸದ ಬೆಳಕಿನಿಂದ ವರ್ತಮಾನದ ವಿದ್ಯಮಾನಗಳನ್ನು ನೋಡಿದರೆ ರಾಜ್ಯದ ಬಿಜೆಪಿ ಸರ್ಕಾರದ ಭವಿಷ್ಯ ನುಡಿಯುವುದು ಬಹಳ ಕಷ್ಟದ ಕೆಲಸ ಅಲ್ಲ.

ವರ್ತಮಾನಕ್ಕೆ ಬರೋಣ. ಡಿ.ವಿ.ಸದಾನಂದ ಗೌಡರನ್ನು ಬದಲಾಯಿಸಿ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡುವುದರಿಂದ  ಬಿಜೆಪಿಯೊಳಗಿನ ಬಿಕ್ಕಟ್ಟು ಶಾಶ್ವತ ಪರಿಹಾರ ಕಾಣಲಿದೆ ಎಂದು ಯಾರಾದರೂ ಹೇಳಿದರೆ ಅವರನ್ನು ಸುಳ್ಳುಗಾರರೆಂದೂ,  ಈ ಹೇಳಿಕೆಯನ್ನು ಯಾರಾದರೂ ನಂಬುತ್ತೇನೆ ಎಂದು ಹೇಳಿದರೆ ಅವರನ್ನು ಮೂರ್ಖರೆಂದೂ ಕರೆಯಬೇಕಾಗುತ್ತದೆ. ಸಮಸ್ಯೆಯನ್ನು ಬಗೆಹರಿಸಲು ಹೊರಡುವವರು ಮೊದಲು ಅದಕ್ಕೆ ಕಾರಣಗಳೇನು ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಡಯಾಗ್ನಿಸಿಸ್ ತಪ್ಪು ಆಗಿಬಿಟ್ಟರೆ ಚಿಕಿತ್ಸೆಯೂ ತಪ್ಪಾಗಿ ರೋಗ ಉಲ್ಬಣಗೊಳ್ಳುತ್ತದೆಯೇ ಹೊರತು ಗುಣವಾಗುವುದಿಲ್ಲ. ಬಿಜೆಪಿಯಲ್ಲಿ ನಡೆಯುತ್ತಿರುವುದು ಈ `ರಾಂಗ್ ಡಯಾಗ್ನಿಸಿಸ್`. ಆ ಪಕ್ಷದ ಸಮಸ್ಯೆ ಸದಾನಂದ ಗೌಡ, ಈಶ್ವರಪ್ಪ, ಶೆಟ್ಟರ್..ಇವರ‌್ಯಾರೂ ಅಲ್ಲ. ಅದರ ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ. ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗಾಯಕ್ಕೆ ಔಷಧ ಹಚ್ಚದೆ ನೋವುನಿವಾರಕ ಗುಳಿಗೆ ನೀಡಿ ಮಲಗಿಸಿದ ಹಾಗೆ ಆಗುತ್ತದೆ, ಗಾಯ ಉಲ್ಬಣಗೊಳ್ಳುತ್ತಾ ಹೋಗುತ್ತದೆ. ಗೌಡರ ಪದಚ್ಯುತಿ, ಶೆಟ್ಟರ್ ನೇಮಕ, ಜತೆಗೊಬ್ಬ ಉಪಮುಖ್ಯಮಂತ್ರಿ, ಸಂಪುಟ ಪುನರ‌್ರಚನೆ ಮೊದಲಾದ ಯಾವುದೇ ಔಷಧಿಯಿಂದ ಬಿಜೆಪಿಯನ್ನು ಕಾಡುತ್ತಿರುವ ಭಿನ್ನಮತದ ರೋಗವನ್ನು ಕನಿಷ್ಠ ಮುಂದಿನ ಚುನಾವಣೆವರೆಗೂ ಗುಣಪಡಿಸಲು ಸಾಧ್ಯವಾಗಲಾರದು. ಇವೆಲ್ಲ ತೇಪೆ ಹಚ್ಚುವ ಕೆಲಸ ಅಷ್ಟೆ.

ನಾಲ್ಕು ವರ್ಷಗಳ ಹಿಂದೆ ಯಡಿಯೂರಪ್ಪನವರು ಒಂದು ರಾಜ್ಯ ಗೆದ್ದುಕೊಂಡು ಬಂದ ವೀರನಾಯಕನಾಗಿದ್ದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಭಾರತೀಯ ಜನತಾ ಪಕ್ಷ ಸರ್ಕಾರ ರಚಿಸುವ ಅವಕಾಶವನ್ನು ತಂದುಕೊಟ್ಟ ಅವರು ಪಕ್ಷದ ಪಾಲಿನ ಭಾಗ್ಯವಿಧಾತರಾಗಿದ್ದರು. ರಾಜಕೀಯ ಯಶಸ್ಸಿನ ಅಲೆಯ ಮೇಲೆ ತೇಲುತ್ತಿದ್ದ ಆ ದಿನಗಳಲ್ಲಿ `ನೂರು ಶೆಟ್ಟರ್, ಸಾವಿರ ಈಶ್ವರಪ್ಪ, ಲಕ್ಷ ಅನಂತಕುಮಾರ್‌ನಂತಹವರು ಎದುರುನಿಂತರೂ ನಿಭಾಯಿಸಿಕೊಂಡುಹೋಗಬಲ್ಲೆ` ಎಂಬ ಆತ್ಮವಿಶ್ವಾಸವನ್ನು ಅವರು ಪ್ರದರ್ಶಿಸಬೇಕಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಶೆಟ್ಟರ್ ಅವರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಕಂಟಕವಾಗಬಲ್ಲ ಶತ್ರು ಕಾಣತೊಡಗಿದ್ದ. ವಿರೋಧ ಪಕ್ಷದ ನಾಯಕರಾಗಿ ಆತ್ಮವಿಶ್ವಾಸದಿಂದ ರಾಜಕೀಯ ಮಾಡುತ್ತಾ ಬಂದಿದ್ದ ಯಡಿಯೂರಪ್ಪನವರು ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಹೊತ್ತಿಗೆ ಅಸುರಕ್ಷತೆಯ ಭಾವನೆಯಿಂದ ನರಳತೊಡಗಿದ್ದೇ ಅವರ, ಪಕ್ಷದ ಮತ್ತು ರಾಜ್ಯದ ಜನತೆಯ ಪಾಲಿನ ದುರಂತ.

ಅಂದು ಅವರನ್ನು ಕಾಡಿದ ಅಸುರಕ್ಷತೆಯ ಹಳವಂಡ ಮುಂದುವರಿಯುತ್ತಲೇ ಬಂದು ಈಗ ಸದಾನಂದ ಗೌಡರ ತಲೆದಂಡ ಕೇಳುತ್ತಿದೆ. ತಲೆಗೆ ಹತ್ತಿರುವ ಅದರ ಸವಾರಿ ಇಲ್ಲಿಗೆ ನಿಂತುಬಿಡುತ್ತದೆ ಎಂದು ಹೇಳುವ ಹಾಗಿಲ್ಲ. ಸದಾನಂದ ಗೌಡರು ರಹಸ್ಯ ಮತದಾನದ ಮೂಲಕ ಶಾಸಕಾಂಗ ಪಕ್ಷದ ನಾಯಕರಾದವರು, ಆ ದೃಷ್ಟಿಯಿಂದ ನೋಡಿದರೆ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಯಡಿಯೂರಪ್ಪನವರಲ್ಲ. ಆದರೆ ಅವರ ಬೆಂಬಲ ಇಲ್ಲದೆ ಇದ್ದರೆ ಗೌಡರು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎನ್ನುವುದೂ ನಿಜ.

ಯಡಿಯೂರಪ್ಪನವರಿಗೆ ಇಂತಹದ್ದೊಂದು ನಂಬಿಕೆ ಗೌಡರ ಮೇಲೆ ಹುಟ್ಟಲು ಕಾರಣ ಇಬ್ಬರ ನಡುವಿನ ದೀರ್ಘಕಾಲದ ಒಡನಾಟ. ಈ ರೀತಿ ತಮಗೆ ವಿಧೇಯರಾಗಿದ್ದ, ಒಕ್ಕಲಿಗರೆಂದು ಕರೆಸಿಕೊಂಡರೂ ಪೂರ್ಣರೂಪದ ಒಕ್ಕಲಿಗರಲ್ಲದ, ಸೌಮ್ಯ ಸ್ವಭಾವದ ಸದಾನಂದ ಗೌಡರನ್ನೇ ಯಡಿಯೂರಪ್ಪನವರು ನಂಬಲಿಲ್ಲ ಎಂದ ಮೇಲೆ, ತಮ್ಮಂತೆಯೇ ಜಾತಿ ಬಲ ಹೊಂದಿರುವ, ಯಾರಿಗೂ ಪೂರ್ಣವಾಗಿ ವಿಧೇಯರಾಗಿ ಉಳಿಯದೆ ಇರುವ,  ಹಳೆಯ ದ್ವೇಷದ ಸೇಡು ತೀರಿಸಿಕೊಳ್ಳಲು ಅವಕಾಶ ಇರುವಂತಹ ಜಗದೀಶ್ ಶೆಟ್ಟರ್ ಅವರನ್ನು ಸಹಿಸಿಕೊಳ್ಳಬಹುದೇ?  ಇದು ಬಿಜೆಪಿಯ ಭವಿಷ್ಯವನ್ನು ನಿರ್ಧರಿಸುವಂತಹ ಪ್ರಶ್ನೆ.
ಅಧಿಕಾರದ ಕುರ್ಚಿಯ ಮಹತ್ವವೇ ಅಂತಹದ್ದು. ಅದರ ಮೇಲೇರಿ ಕೂತವನ ತಲೆಯಲ್ಲಿ ಅಲ್ಲಿಯ ವರೆಗೆ ಇಲ್ಲದ ಆಸೆ-ಆಕಾಂಕ್ಷೆಗಳು ಹುಟ್ಟಿಕೊಳ್ಳುತ್ತವೆ, ಎಂತಹ ಪುಕ್ಕಲು
ಸ್ವಭಾವದವರ ಎದೆಯಲ್ಲಿಯೂ ಸ್ಥಾನದ ಬಲ ಒಂದಷ್ಟು ಧೈರ್ಯವನ್ನು ತುಂಬುತ್ತದೆ. ಇಂದಿರಾಗಾಂಧಿ ಹೇಳಿದರೆ ಪೊರಕೆ ಎತ್ತಿಕೊಂಡು ಗುಡಿಸಬಲ್ಲೆ ಎಂದು ಹೇಳಿದ್ದ ರಾಷ್ಟ್ರಪತಿ ಗ್ಯಾನಿ ಜೈಲ್‌ಸಿಂಗ್ ಅವರೇ ರಾಜೀವ್‌ಗಾಂಧಿಯವರನ್ನು ಪದಚ್ಯುತಿಗೊಳಿಸಲು ಹೊರಟಿಲ್ಲವೇ ಹಾಗೆ. ಜಗದೀಶ್ ಶೆಟ್ಟರ್ ಅವರಿಗೆ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಂಡರೂ  ಸಮರ್ಥಿಸಿಕೊಳ್ಳಲು ಕಾರಣಗಳಿವೆ, ಅಂತಹ ಅವಕಾಶವೂ ಒದಗಿ ಬಂದಿದೆ. ಸಚಿವನಾಗುವ ಸಾಧ್ಯತೆ ಇದ್ದಾಗಲೂ ಯಡಿಯೂರಪ್ಪ ಬಿಡಲಿಲ್ಲ, ಮುಖ್ಯಮಂತ್ರಿಯಾಗುವ ಅವಕಾಶ ಬಂದಾಗಲೂ ತಪ್ಪಿಸಿದ್ದರು. ರಾಜಕೀಯವಾಗಿ ಮುಗಿಸಿಬಿಡಬೇಕೆಂದು ಸ್ಥಳೀಯವಾಗಿ ಪ್ರತಿಸ್ಪರ್ಧಿಗಳನ್ನು ಸೃಷ್ಟಿಸಿ ಬೆಳೆಸಿದರು.

ಇವೆಲ್ಲವನ್ನೂ ಶೆಟ್ಟರ್ ಹೊಟ್ಟೆಯಲ್ಲಿ ಹಾಕಿಕೊಂಡು ಯಡಿಯೂರಪ್ಪನವರ ಆಜ್ಞಾನುವರ್ತಿಯಾಗಿ ಸರ್ಕಾರವನ್ನು ನಡೆಸಿಕೊಂಡು ಹೋದರೆ ಪಕ್ಷಕ್ಕೆ ನೆಮ್ಮದಿ, ಅನಿಶ್ಚಿತ ರಾಜಕಾರಣದಿಂದ ಬೇಸತ್ತುಹೋದ ರಾಜ್ಯದ ಜನತೆಗೂ ಶಾಂತಿ. ಶೆಟ್ಟರ್ ಅಷ್ಟೊಂದು ವಿಶಾಲ ಹೃದಯಿಗಳಾಗದೆ ಮುಯ್ಯಿ ತೀರಿಸಿಕೊಳ್ಳಲು ಹೊರಟರೆ ಅದಕ್ಕೂ ಅವಕಾಶ ಇದೆ.
ಭ್ರಷ್ಟಾಚಾರದ ಆರೋಪಗಳಿಂದಾಗಿ ಜರ್ಝರಿತರಾಗಿರುವ ಈಗಿನ ಯಡಿಯೂರಪ್ಪ, ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ಕೂತು ದೆಹಲಿಯಲ್ಲಿದ್ದ ಶೆಟ್ಟರ್ ಅವರನ್ನು ಮಣಿಸಿದ ಯಡಿಯೂರಪ್ಪ ಅಲ್ಲ. ಕೈ ತಪ್ಪಿಹೋಗಿರುವ ಅಧಿಕಾರ, ಮೈ ತುಂಬಾ ಹರಡಿಕೊಂಡಿರುವ ಭ್ರಷ್ಟಾಚಾರದ ಆರೋಪಗಳು ಮತ್ತು ಹೆಚ್ಚುತ್ತಿರುವ ರಾಜಕೀಯ ಶತ್ರುಗಳಿಂದಾಗಿ ಅವರೊಬ್ಬ ದುರ್ಬಲ ನಾಯಕ. ಶತ್ರು ದುರ್ಬಲನಾಗಿದ್ದಾಗ ಕ್ಷಮಿಸುವವರು ಕಡಿಮೆ.

ಚುನಾವಣೆಗೆ ಹನ್ನೊಂದು ತಿಂಗಳು ಇರುವಾಗ ಮುಖ್ಯಮಂತ್ರಿಯಾದವರ ಕಣ್ಣು ಸಹಜವಾಗಿ ಚುನಾವಣೆಯ ನಂತರದ ಐದು ವರ್ಷಗಳ ಮೇಲಿರುತ್ತದೆ. ಒದಗಿಬಂದಿರುವ ಅವಕಾಶವನ್ನು ಕಳೆದುಕೊಳ್ಳುವಷ್ಟು ಶೆಟ್ಟರ್ ದಡ್ಡರಿರಲಾರರು. ರಾಜಕೀಯವಾಗಿ ಯಡಿಯೂರಪ್ಪನವರಿಗಿಂತಲೂ ಹೆಚ್ಚಿನ ಅನುಕೂಲತೆಗಳು ಶೆಟ್ಟರ್ ಅವರಿಗಿದೆ. ಅವರು ಬಿಜೆಪಿಯ ಶಕ್ತಿಕೇಂದ್ರವಾದ ಉತ್ತರ ಕರ್ನಾಟಕದಿಂದ ಬಂದವರು, ಲಿಂಗಾಯತರಲ್ಲಿ ಹೆಚ್ಚು ಶ್ರಿಮಂತರಾಗಿರುವ ಬಣಜಿಗ ಪಂಗಡಕ್ಕೆ ಸೇರಿದವರು, ಕಾನೂನು ಕಲಿತು ಒಂದಷ್ಟು ವರ್ಷ ವಕೀಲಿ ವೃತ್ತಿ ಮಾಡಿದವರು, ಯಡಿಯೂರಪ್ಪನವರಿಗೆ ಹೋಲಿಸಿದರೆ ಇನ್ನೂ ಯುವಕರು, ಇಷ್ಟು ಮಾತ್ರವಲ್ಲ ಸಂಘಪರಿವಾರದ ಜತೆ ಪ್ರಾರಂಭದಿಂದಲೂ ಗುರುತಿಸಿಕೊಂಡು ಬಂದ ಕುಟುಂಬದ ಸದಸ್ಯರಾಗಿರುವ ಕಾರಣ ಅವರ ಪಕ್ಷನಿಷ್ಠೆ ಪ್ರಶ್ನಾತೀತವಾದುದು. ಈ ಯಾವ ಅನುಕೂಲತೆಗಳೂ ಯಡಿಯೂರಪ್ಪನವರಿಗೆ ಇರಲಿಲ್ಲ. 

ಬಿ.ಎಸ್.ಯಡಿಯೂರಪ್ಪನವರ ದೊಡ್ಡ ರಾಜಕೀಯ ಬಲ-ಜಾತಿ. ಮುಖ್ಯಮಂತ್ರಿಗಳಾದ ನಂತರ ತಮ್ಮ ಸ್ಥಾನಕ್ಕೆ ಅಪಾಯ ಎದುರಾದಾಗೆಲ್ಲ ಅವರು ಲಿಂಗಾಯತ ಮಠಗಳ ಮೂಲಕ ಬಳಸಿಕೊಂಡಿದ್ದು ಜಾತಿಗಳನ್ನು. ಜಾತಿ ಎನ್ನುವುದು ಬೆಂಕಿ ಇದ್ದ ಹಾಗೆ, ಅದರ ಜತೆಗೆ ಆಟವಾಡಲು ಗೊತ್ತಿರಬೇಕು ಇಲ್ಲದೆ ಇದ್ದರೆ ಅದೇ ಬೆಂಕಿ ಸುಟ್ಟು ಹಾಕುತ್ತದೆ. ಬಿಹಾರದಲ್ಲಿ ಲಾಲುಪ್ರಸಾದ್ ಇದೇ ಜಾತಿ ಕಾರ್ಡ್ ಬಳಸಿ ಹದಿನಾರು ವರ್ಷಗಳ ಕಾಲ ಆ ರಾಜ್ಯವನ್ನು ಆಳಿದರು. ನಿತೀಶ್‌ಕುಮಾರ್ ಬಂದು ಅದೇ ಜಾತಿಕಾರ್ಡಿನ ಮಗ್ಗುಲು ಬದಲಿಸಿ ಆಡಿದ ಆಟಕ್ಕೆ ಲಾಲು ಮಣ್ಣುಮುಕ್ಕಿದರು. ಜಗದೀಶ್ ಶೆಟ್ಟರ್ ಅವರ ಮುಂದೆ ಯಡಿಯೂರಪ್ಪನವರು ಆಡುತ್ತಾ ಬಂದ ಜಾತಿಯ ಆಟದ ಮಾದರಿ ಇದೆ. ಅದನ್ನೇ ಇಟ್ಟುಕೊಂಡು ಆಡುವುದು ಅವರಿಗೂ ಕಷ್ಟವೇನಲ್ಲ. ಯಡಿಯೂರಪ್ಪನವರಷ್ಟು ಜಾತಿ-ಮಠಗಳ ಮೋಹಿಯಲ್ಲದೆ ಇದ್ದರೂ ಶೆಟ್ಟರ್ ನಾಳೆಯಿಂದ ರಾಜ್ಯದ ಪ್ರಮುಖ ಮಠಗಳಿಗೆ ಹೋಗಿ ಸ್ವಾಮೀಜಿಗಳ ಕಾಲಿಗೆ ಅಡ್ಡಬಿದ್ದ ಕೂಡಲೇ ಯಡಿಯೂರಪ್ಪನವರ ಹೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳುವುದು ಖಂಡಿತ. ಕರೆದಾಗಲೆಲ್ಲ ತಮ್ಮ ಮನೆಗೆ ಉಪಾಹಾರ-ಊಟಕ್ಕೆ ಬರದೆ ಹೋದರೆ, ತಮ್ಮ ಬೆಂಬಲಿಗ ಸಚಿವರು-ಶಾಸಕರ ಕಡತಗಳಿಗೆ ಕಣ್ಣುಮುಚ್ಚಿ ಸಹಿಹಾಕದೆ ಇದ್ದರೆ, ಪ್ರತಿಬಾರಿ ನನ್ನ ನಾಯಕ ಯಡಿಯೂರಪ್ಪನವರು ಎಂದು ಹೇಳದೆ ಇದ್ದರೆ, ಅನಂತಕುಮಾರ್ ಮತ್ತು ದೇವೇಗೌಡರ ಜತೆ ಸಂಪರ್ಕದಲ್ಲಿದ್ದಾರೆ ಎಂಬ ಗಾಳಿ ಸುದ್ದಿ ಹರಡಿಬಿಟ್ಟರೆ ಮರುದಿನ ಯಡಿಯೂರಪ್ಪ ಮತ್ತು ಅವರ ಮಕ್ಕಳು ಬೆಂಬಲಿಗ ಶಾಸಕರ ಜತೆ ಸೇರಲು ಬೆಂಗಳೂರು ಸಮೀಪದ ಯಾವುದಾದರೂ ರೆಸಾರ್ಟ್ ಹುಡುಕುವುದು ಖಂಡಿತ. ಈಗಲೂ ನಾಯಕತ್ವ ಬದಲಾವಣೆಯಿಂದ ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನವಾಯಿತೆಂದು ಯಾರಾದರೂ ಹೇಳಲು ಸಾಧ್ಯವೇ? ಇದು ಅಂತ್ಯ ಅಲ್ಲ, ಆರಂಭ. ರಾಜ್ಯದ ಜನತೆಯ ಕರ್ಮ.