Thursday, October 18, 2012

ಬೇಕಾಗಿರುವುದು ಸುಡುವ ಬೆಂಕಿ ಅಲ್ಲ; ಅರಿವಿನ ಬೆಳಕು - ದಿನೇಶ್ ಅಮೀನ್ ಮಟ್ಟು October 08, 2012


ಗೋಡೆಯವರೆಗೆ ತಳ್ಳಿಸಿಕೊಂಡ ಮನುಷ್ಯನಿಗೆ ತಿರುಗಿ ಬೀಳುವುದನ್ನು ಬಿಟ್ಟು ಬೇರೆ ಆಯ್ಕೆಗಳಿರುವುದಿಲ್ಲ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ರೈತರದ್ದು ಈಗ ಇದೇ ಸ್ಥಿತಿ. ಅಸಹಾಯಕತೆಯಿಂದಾಗಿ ಹತಾಶರಾಗಿರುವ ಅವರು ಎಲ್ಲರ ಮೇಲೆ ಎರಗಿ ಬೀಳುತ್ತಿದ್ದಾರೆ.
ಅನ್ಯಾಯದ ಪರಂಪರೆಗೆ ಸಿಕ್ಕಿ ಸೋತುಹೋದವರಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು, ಅಲ್ಲಿ ವಾದ ಮಂಡಿಸುವ ನಮ್ಮ ವಕೀಲರು, ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರಧಾನಿಗಳು, ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಕೊನೆಗೆ ಬೀದಿಯಲ್ಲಿ ತಮ್ಮ ಪಾಡಿಗೆ ಹೋಗುತ್ತಿರುವ ಅಮಾಯಕ ಜನ.. ಎಲ್ಲರೂ ತಮ್ಮ ಶತ್ರುಗಳಂತೆಯೇ ಕಾಣಿಸುವುದು ಸಹಜ.
(ಇವರಲ್ಲಿ ಕೆಲವರು ಶತ್ರುಗಳೆನ್ನುವುದೂ ನಿಜ). ಈ ರೀತಿಯ ಭಾವಾವೇಶದ ಉಗ್ರ ಅಭಿವ್ಯಕ್ತಿ ವೈಯಕ್ತಿಕವಾದ ಹತಾಶೆಯನ್ನು ಕಡಿಮೆ ಮಾಡಿ  ಒಂದಷ್ಟು ಸಮಾಧಾನವನ್ನು ತಂದುಕೊಡಬಹುದು, ಆದರೆ ನ್ಯಾಯವನ್ನು ಪಡೆಯಲು ಸಾಧ್ಯವಾಗಬಹುದೇ?
ಈ ರೋಷ-ದ್ವೇಷಗಳ  ಪ್ರದರ್ಶನ ಹೆಚ್ಚೆಂದರೆ ಈ ತಿಂಗಳ ಅಂತ್ಯದವರೆಗೆ ಇರಬಹುದು.
ತಮಿಳುನಾಡಿನಲ್ಲಿ ಈಶಾನ್ಯ ಮಾರುತ ಸುರಿಯಲಾರಂಭಿಸುತ್ತಿದ್ದಂತೆ ಆ ಕಡೆಯ ಒತ್ತಡ ಕಡಿಮೆಯಾಗುತ್ತದೆ. ಅಷ್ಟರಲ್ಲಿ ದೇವೇಗೌಡರ ಕಣ್ಣೀರು ಆರಿಹೋಗುತ್ತದೆ, ನಟ ಅಂಬರೀಷ್ ಅವರ ಅಭಿನಯವೂ ಮುಗಿದಿರುತ್ತದೆ, ಮಾದೇಗೌಡರ ಸಿಟ್ಟು ತಣ್ಣಗಾಗುತ್ತದೆ, ಕನ್ನಡ ಹೋರಾಟಗಾರರು ಹಳೆಯ ಭಿತ್ತಿಪತ್ರಗಳನ್ನು ಕಿತ್ತುಹಾಕಿ ಹೊಸ ಹೋರಾಟದ ಭಿತ್ತಿಪತ್ರಗಳನ್ನು ಅಂಟಿಸಲು ಗೋಡೆಗಳನ್ನು ಹುಡುಕುತ್ತಿರುತ್ತಾರೆ.

ಮಾಧ್ಯಮಗಳು ಮತ್ತೊಂದು ರೋಚಕ ಸುದ್ದಿಯ ಬೆನ್ನು ಹತ್ತಿರುತ್ತವೆ. ಕಾವೇರಿ ಕಣಿವೆಯ ರೈತರು ರಾಗಿಮುದ್ದೆ ತಿಂದು ಕಂಬಳಿ ಹೊದ್ದುಕೊಂಡು ಮಲಗಿಬಿಡುತ್ತಾರೆ.
ಮುಂದಿನವರ್ಷದ ಜುಲೈ ತಿಂಗಳ ಹೊತ್ತಿಗೆ ಜಯಲಲಿತಾ ಇಲ್ಲವೇ ಕರುಣಾನಿಧಿ  `ಕರ್ನಾಟಕ ನೀರು ಬಿಡುತ್ತಿಲ್ಲ` ಎಂದು ಪ್ರಧಾನಮಂತ್ರಿಗೆ ಪತ್ರ ಬರೆದಾಗ  ನಿದ್ದೆ ಹೋದ ರೈತರಾದಿಯಾಗಿ ವಿರಮಿಸುತ್ತಿದ್ದ ಪ್ರತಿಭಟನೆಯ ಹಳೆಯ ಪಾತ್ರಧಾರಿಗಳೆಲ್ಲ  ಮೈಮುರಿದು ಕೊಡವಿಕೊಂಡು ಎದ್ದು ನಿಲ್ಲುತ್ತಾರೆ.
ನೆಲ-ಜಲದ ಪ್ರೇಮ ಭೋರ್ಗರೆದು ಹರಿಯುತ್ತದೆ. ಮತ್ತೆ ಪ್ರತಿಭಟನೆ, ಬಂದ್, ಒಂದಷ್ಟು ಆರೋಪ ನಂತರ ಎಲ್ಲವೂ ಯಥಾಸ್ಥಿತಿ. ಇಪ್ಪತ್ತೊಂದು ವರ್ಷಗಳ ಹಿಂದೆ ಕಾವೇರಿ ನ್ಯಾಯಮಂಡಳಿ ಮಧ್ಯಂತರ ಐತೀರ್ಪು ನೀಡಿದ ದಿನದಿಂದ ಇಲ್ಲಿಯ ವರೆಗೆ ನಡೆಯುತ್ತಾ ಬಂದದ್ದು ಇದೇ  ನಾಟಕ.
(ಪುರಾವೆಗಳು ಬೇಕು ಎನ್ನುವವರು ಈ 21 ವರ್ಷಗಳ ಪತ್ರಿಕೆಗಳನ್ನು ಹುಡುಕಿ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ ಪ್ರಕಟವಾದ ಸುದ್ದಿಗಳ ಮೇಲೆ ಕಣ್ಣುಹಾಯಿಸಬಹುದು.)

ಪ್ರತಿಬಾರಿ ತಮಿಳುನಾಡು ಕರ್ನಾಟಕವನ್ನು ಈ ರೀತಿಯ `ಖೆಡ್ಡಾ`ಕ್ಕೆ ಬೀಳಿಸಿ ಚಂದ ನೋಡುತ್ತಾ ತಣ್ಣಗೆ ಕೂತಿರುತ್ತದೆ. ಗುಂಡಿಗೆ ಬಿದ್ದವರು ಸಹಜವಾಗಿಯೇ ಲಬೋಲಬೋ ಎಂದು ಎದೆಬಡಿದುಕೊಳ್ಳುತ್ತಾರೆ.
ತಮಿಳುನಾಡಿನ ರಾಜಕಾರಣಿಗಳು ಈ ರೀತಿ ಕೂಗಾಡುತ್ತಿರುವ ಕನ್ನಡಿಗರನ್ನು ತೋರಿಸಿ `ಕನ್ನಡಿಗರಿಗೆ ನ್ಯಾಯಾಲಯ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಹೀಗೆ ಯಾವುದರ ಮೇಲೆಯೂ ನಂಬಿಕೆ ಇಲ್ಲ. ಇವರು ಜಗಳಗಂಟರು, ಭಾಷಾಂಧರು....` ಎಂಬ ಆರೋಪಗಳನ್ನು ಮಾಡುತ್ತಾರೆ.
ಈ ಆರೋಪವನ್ನು ಸಾಬೀತುಪಡಿಸುವಂತೆ ಕನ್ನಡಿಗರು ಇನ್ನಷ್ಟು ಉಗ್ರರೀತಿಯಲ್ಲಿ ಭಾಷಣ ಮಾಡುತ್ತಾರೆ, ಘೋಷಣೆ ಕೂಗುತ್ತಾರೆ. ರಕ್ತ ಹರಿಸುವ, ನೀರಿಗೆ ಧುಮುಕುವ ವೀರಾವೇಶದ ಮಾತುಗಳನ್ನಾಡುತ್ತಾರೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ತಿಳಿದುಕೊಳ್ಳಲು ತನಿಖಾ ಸಮಿತಿ ನೇಮಿಸಬೇಕಾಗಿಲ್ಲ.
ಕಾವೇರಿ ನದಿಯ ಇತಿಹಾಸವನ್ನು ತೆಗೆದುನೋಡಿದರೆ ಸಾಕು, ಆಗಿರುವ ಅನ್ಯಾಯಕ್ಕೆ ಪುಟಪುಟಗಳಲ್ಲಿ ಸಾಕ್ಷಿ ಸಿಗುತ್ತದೆ. ಆದರೆ ಕರ್ನಾಟಕದಿಂದ ಹೊರಗೆ ಮುಖ್ಯವಾಗಿ ರಾಜಧಾನಿ ದೆಹಲಿಯಲ್ಲಿ ಜನಾಭಿಪ್ರಾಯ ಅನ್ಯಾಯಕ್ಕೊಳಗಾದ ಕರ್ನಾಟಕದ ಪರವಾಗಿ ಇಲ್ಲ, ಕರ್ನಾಟಕದ ಪ್ರಾಂತೀಯ ಧೋರಣೆಗೆ ಬಲಿಯಾಗುತ್ತಿದ್ದೇವೆ ಎಂದು ಸುಳ್ಳುಸುಳ್ಳೇ ರೋದಿಸುತ್ತಿರುವ ತಮಿಳುನಾಡು ಪರವಾಗಿ ಇದೆ.
ಹೀಗೆಂದು ಹೇಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. (ದೆಹಲಿಯಲ್ಲಿದ್ದಷ್ಟು ಕಾಲ ಅಲ್ಲಿನ ಪತ್ರಕರ್ತರು, ಅಧಿಕಾರಿಗಳು ಮತ್ತು ರಾಜಕಾರಣಿಗಳ ಜತೆಗಿನ ಒಡನಾಟದ ಆಧಾರದಲ್ಲಿ, ಜವಾಬ್ದಾರಿಯಿಂದಲೇ ಇದನ್ನು ಹೇಳುತ್ತಿದ್ದೇನೆ.)

ಯಾಕೆ ಹೀಗಾಗುತ್ತಿದೆ ?ಕಾವೇರಿ ನ್ಯಾಯಮಂಡಳಿ ಸ್ಥಾಪನೆಯ ಹಿಂದಿನ ಇತಿಹಾಸವನ್ನು ಕೆದಕುವುದು ಬೇಡ, ಅದರ ನಂತರದ ಬೆಳವಣಿಗೆಗಳನ್ನು ಗಮನಿಸುತ್ತಾ ಬಂದರೂ ಕರ್ನಾಟಕ ಮತ್ತೆಮತ್ತೆ ಎಡವಿ ಬಿದ್ದ ಹೆಗ್ಗುರುತುಗಳು ಕಾಣಸಿಗುತ್ತವೆ.
ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಯಾವಾಗಲೂ ನಮಗೆ ಅನ್ಯಾಯವಾಗಿದೆ ಎಂಬ ಭಾವನೆಯನ್ನು ಹುಟ್ಟಿಸುವಂತಹ ತೀರ್ಪುಗಳನ್ನೇ ಯಾಕೆ ನೀಡುತ್ತಿದೆ ಎಂಬ ಪ್ರಶ್ನೆಗೂ ಹೆಜ್ಜೆ ತಪ್ಪಿದ ಕರ್ನಾಟಕದ ನಡವಳಿಕೆಯಲ್ಲಿ ಉತ್ತರ ಇದೆ. 

ಕರ್ನಾಟಕದ ಆಯ್ಕೆ ನ್ಯಾಯಮಂಡಳಿ ಖಂಡಿತ ಆಗಿರಲಿಲ್ಲ, ಮಾತುಕತೆಯ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕೆಂಬುದು ರಾಜ್ಯದ ಬಯಕೆಯಾಗಿತ್ತು. ಇದರ ಹೊರತಾಗಿಯೂ ಸುಪ್ರೀಂಕೋರ್ಟ್ 1990ರಲ್ಲಿ ಕಾವೇರಿ ನ್ಯಾಯಮಂಡಳಿ ಸ್ಥಾಪನೆಗೆ ಆದೇಶ ನೀಡಿದ್ದರಿಂದ ಸಹಜವಾಗಿಯೇ ಕರ್ನಾಟಕಕ್ಕೆ ಅಸಮಾಧಾನವಾಗಿತ್ತು.
ಮರುವರ್ಷವೇ ನ್ಯಾಯಮಂಡಳಿ ನೀಡಿದ ಮಧ್ಯಂತರ ಐತೀರ್ಪು ಈ ಅಸಮಾಧಾನವನ್ನು ಇನ್ನಷ್ಟು ಹೆಚ್ಚಿಸಿತ್ತು.  ಸರ್ಕಾರ ಬದಲಾದರೂ, ಆಡಳಿತ ಪಕ್ಷಗಳು ಬದಲಾದರೂ ನ್ಯಾಯಮಂಡಳಿಯ ಬಗೆಗಿನ ಕರ್ನಾಟಕದ ಅಸಹನೆ ಕಡಿಮೆಯಾಗಲೇ ಇಲ್ಲ.
1991ರಲ್ಲಿ ಕಾವೇರಿ ಕಣಿವೆಗೆ ಭೇಟಿ ನೀಡಿದ್ದ ನ್ಯಾಯಮಂಡಳಿಯ ನ್ಯಾಯಮೂರ್ತಿಗಳನ್ನು ರಾಜ್ಯದ ಜನತೆ ಸ್ವಾಗತಿಸಿದ್ದು ಕಪ್ಪುಬಾವುಟ ಮತ್ತು `ಗೊ ಬ್ಯಾಕ್` ಎಂಬ ಘೋಷಣೆಗಳ ಮೂಲಕ. ಇಷ್ಟು ಮಾತ್ರವಲ್ಲ, ನ್ಯಾಯಮಂಡಳಿ ಕಾವೇರಿ ಕಣಿವೆಯ ರಾಜ್ಯಗಳಿಗೆ ಭೇಟಿ ನೀಡಿದಾಗ ತಮಿಳುನಾಡಿನಲ್ಲಿ ನ್ಯಾಯಮೂರ್ತಿಗಳ ಪತ್ನಿಯರಿಗೆ ಸೀರೆ-ಬಳೆ ಕೊಟ್ಟರು ಎಂದು ಗುಲ್ಲೆಬ್ಬಿಸಿ ಕೊನೆಗೆ ಸುಪ್ರೀಂಕೋರ್ಟ್‌ವರೆಗೆ ದೂರು ಕೊಂಡೊಯ್ದದದ್ದು ಕೂಡಾ ಕರ್ನಾಟಕ.
ರಾಜ್ಯಕ್ಕೆ ನ್ಯಾಯಮಂಡಳಿ ಭೇಟಿ ನೀಡಿದ್ದಾಗ ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಔತಣಕೂಟಕ್ಕೆ  ನ್ಯಾಯಮೂರ್ತಿಗಳೊಬ್ಬರು ನಗರದಲ್ಲಿರುವ ತಮ್ಮ ಸಂಬಂಧಿಕರನ್ನು ಆಹ್ಹಾನಿಸಲು ಬಯಸಿದಾಗ ಕೆಲವು ಅಧಿಕಾರಿಗಳು ನಿರಾಕರಿಸಿ ಮುಜುಗರಕ್ಕೆ ಈಡು ಮಾಡಿದ್ದರು.
ಆಗ ಇದ್ದ ಮೂವರು ನ್ಯಾಯಮೂರ್ತಿಗಳಲ್ಲಿ ಒಬ್ಬರು ಅಂತಿಮ ಐತೀರ್ಪು ನೀಡಿದ ನ್ಯಾಯಮಂಡಳಿಯಲ್ಲಿಯೂ ಇದ್ದರು. ಈ ರೀತಿ ನ್ಯಾಯಮೂರ್ತಿಗಳನ್ನು ಕೆಣಕಿದ ಹಲವಾರು ಉದಾಹರಣೆಗಳಿವೆ. ತಮಿಳುನಾಡಿನ ನಡವಳಿಕೆ ಇದಕ್ಕಿಂತ ಸಂಪೂರ್ಣ ಭಿನ್ನವಾಗಿತ್ತು.
ನ್ಯಾಯಮಂಡಳಿಯ ಸದಸ್ಯರು ಸಾಗುವ ಹಾದಿಯಲ್ಲೆಲ್ಲ ಅವರನ್ನು ಸ್ವಾಗತಿಸುವ ಬ್ಯಾನರ್‌ಗಳು, ಕಮಾನುಗಳನ್ನು ಹಾಕಲಾಗಿತ್ತು. ತಂಜಾವೂರಿನ ಜಿಲ್ಲಾಧಿಕಾರಿಗಳು ನ್ಯಾಯಮೂರ್ತಿಗಳ ಕಾಲಿಗೆ ಬಿದ್ದುಬಿಟ್ಟಿದ್ದರು. ಜಯಲಲಿತಾ ಆಗ ಅಧಿಕಾರದಲ್ಲಿ ಇಲ್ಲದೆ ಇದ್ದರೂ ಬಂದು ನ್ಯಾಯಮೂರ್ತಿಗಳನ್ನು ಎದುರುಗೊಂಡಿದ್ದರು. ಇದು ತಮಿಳುನಾಡು ಶೈಲಿ.ಅದೆಂದೂ ನ್ಯಾಯಮಂಡಳಿಯನ್ನು ಕೆಣಕಲು ಹೋಗಿಲ್ಲ.

ಇನ್ನೇನು ನ್ಯಾಯಮಂಡಳಿ ಅಂತಿಮ ಐತೀರ್ಪು ನೀಡುವ ಕೆಲವೇ ತಿಂಗಳುಗಳ ಮೊದಲು ಇಬ್ಬರು ಸದಸ್ಯ ನ್ಯಾಯಮೂರ್ತಿಗಳು ಕಾವೇರಿ ಕಣಿವೆಯಲ್ಲಿ ಪ್ರವಾಸ ಹೋಗಲು ಇಚ್ಚಿಸಿದಾಗಲೂ ವಿರೋಧಿಸಿದ್ದು ಕರ್ನಾಟಕ.
ಈ ಪ್ರವಾಸಕ್ಕೆ ನ್ಯಾಯಮಂಡಳಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಎನ್.ಪಿ.ಸಿಂಗ್ ವ್ಯಕ್ತಪಡಿಸಿದ್ದ ವಿರೋಧವನ್ನೇ ಪ್ರಸ್ತಾಪಿಸಿ `ಅಧ್ಯಕ್ಷರು ಮತ್ತು ಸದಸ್ಯರ ನಡುವಿನ ಜಗಳದಿಂದ ನ್ಯಾಯಮಂಡಳಿ ಮುರಿದುಬಿದ್ದಿದೆ.
ಈ ಪರಿಸ್ಥಿತಿಯಲ್ಲಿ ನ್ಯಾಯಮಂಡಳಿಯನ್ನು ಪುನರ‌್ರಚಿಸಬೇಕು` ಎಂದು ಬೆಂಗಳೂರಿನ ಗಾಂಧಿ ಸಾಹಿತ್ಯ ಸಂಘ ಸುಪ್ರೀಂಕೋರ್ಟಿಗೆ ಮೊರೆ ಹೋಗಿತ್ತು. ಅದರ ಹಿಂದೆ ರಾಜ್ಯದ ಪ್ರಭಾವಶಾಲಿ ನಾಯಕರೊಬ್ಬರಿದ್ದರು ಎನ್ನುವುದು  ಗುಟ್ಟಿನ ಸಂಗತಿಯಾಗಿರಲಿಲ್ಲ.

ಅಂತಿಮವಾಗಿ ನ್ಯಾಯಮಂಡಳಿಯನ್ನು ಪುನರ‌್ರಚಿಸಬೇಕು ಎಂದು ರಾಜ್ಯ ಸರ್ಕಾರವೇ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು. ಈ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು ಮಾತ್ರವಲ್ಲ ಕರ್ನಾಟಕಕ್ಕೆ ಮಾತಿನ ಚಾಟಿಯಿಂದ ಬಾರಿಸಿತ್ತು.

ಈ ರೀತಿಯ `ಅಧಿಕ ಪ್ರಸಂಗತನ`ದ ನಡವಳಿಕೆಯನ್ನು ಅತೀ ಎಚ್ಚರಿಕೆಯ ಸ್ವಭಾವದ ಎಸ್.ಎಂ.ಕೃಷ್ಣ ಅಧಿಕಾರದಲ್ಲಿದ್ದಾಗಲೂ ಮುಂದುವರಿಸಿದರು. 1.25 ಟಿಎಂಸಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಮತ್ತು 0.8 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನದಿಪ್ರಾಧಿಕಾರ ನೀಡಿದ್ದ ಆದೇಶಗಳೆರಡನ್ನೂ ಧಿಕ್ಕರಿಸಿದ್ದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾವೇರಿ ಕಣಿವೆಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಜನಪ್ರಿಯ ರಾಜಕೀಯದ ದೌರ್ಬಲ್ಯಕ್ಕೆ ಬಿದ್ದು ಬಿಟ್ಟರು.
ಇದರಿಂದ ಕೆರಳಿದ ಸುಪ್ರೀಂಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನೂ ದಾಖಲಿಸಿತ್ತು. ಆ ಕಾಲದಲ್ಲಿ ಸುಪ್ರೀಂಕೋರ್ಟ್‌ನ ಸಂದರ್ಶಕರ ಬಾಕ್ಸ್‌ನಲ್ಲಿ ಖಾದಿ ಬಟ್ಟೆಧರಿಸಿದ್ದ ರಾಜಕಾರಣಿಗಳನ್ನು ನೋಡಿದ ಕೂಡಲೇ ನ್ಯಾಯಮೂರ್ತಿಗಳು ಕೆಂಡಾಮಂಡಲವಾಗುತ್ತಿದ್ದರು.
ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗಿಯೇ ಆಗಿನ ಆಡಳಿತ ಪಕ್ಷದ ಹಲವು ನಾಯಕರು ಕಪ್ಪುಕೋಟ್ ಧರಿಸಿ ನ್ಯಾಯಾಲಯಕ್ಕೆಬರುತ್ತಿದ್ದರು. ಸುಪ್ರೀಂಕೋರ್ಟ್‌ಗೆ  ಕರ್ನಾಟಕದ ಬಗ್ಗೆ ಅಷ್ಟೊಂದು ಸಿಟ್ಟಿತ್ತು.  ಈ ರೀತಿ ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ಮತ್ತು ನ್ಯಾಯಾಲಯಗಳನ್ನು ಎದುರುಹಾಕಿಕೊಳ್ಳುವ ಯಾವ ಅವಕಾಶವನ್ನು ರಾಜ್ಯದ ರಾಜಕಾರಣಿಗಳು ಬಿಟ್ಟುಕೊಟ್ಟಿಲ್ಲ.
ತಮಿಳುನಾಡು ಎಂದೂ ಈ ರೀತಿ ವರ್ತಿಸದೆ ಉಪಾಯದಿಂದ ಎಲ್ಲರನ್ನೂ ಒಲಿಸಿಕೊಂಡು ಕೆಲಸ ಸಾಧಿಸಿಕೊಳ್ಳುತ್ತಾ ಬಂದಿದೆ. ರಾಜ್ಯವನ್ನು ಆಳಿದ ರಾಜಕೀಯ ಪಕ್ಷಗಳೆಲ್ಲವೂ ಕಾವೇರಿ ವಿವಾದದ ಬಗೆಗಿನ ತೀರ್ಮಾನಗಳನ್ನು ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದ ಆಧಾರದಲ್ಲಿಯೇ ಕೈಗೊಳ್ಳುತ್ತಾ ಬಂದಿವೆಯೇ ಹೊರತು ಕಾನೂನು ಮತ್ತು ನೀರಾವರಿ ತಜ್ಞರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ.
ಈಗಿನ ವಿವಾದವನ್ನೇ ನೋಡುವುದಾದರೆ, `ಸದ್ಭಾವನೆಯ ಸಂಕೇತವಾಗಿ ಕಾವೇರಿ ನದಿ ಪ್ರಾಧಿಕಾರದ ಸಭೆ ನಡೆಯುವ ವರೆಗೆ ಹತ್ತುಸಾವಿರ ಕ್ಯೂಸೆಕ್ ನೀರು ಬಿಡಲು ತಯಾರು` ಎಂದು ಹೇಳಿ ತನ್ನ ಕೊರಳನ್ನು ಪ್ರಾಧಿಕಾರಕ್ಕೆ ಒಪ್ಪಿಸಿದ್ದು ಯಾರು? 

ಇಷ್ಟೊಂದು ನೀರು ಬಿಟ್ಟುಬಿಟ್ಟರೆ ಕರ್ನಾಟಕದ ರೈತರಿಗೆ ತೊಂದರೆಯಾಗುತ್ತದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಿಗಾಗಲಿ, ಮುಖ್ಯಮಂತ್ರಿಗಳಿಗಾಗಲಿ ಗೊತ್ತಾಗಲಿಲ್ಲವೇ? ಮುಖ್ಯಮಂತ್ರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಲೆಂದೇ ಜಲಸಂಪನ್ಮೂಲ ಸಚಿವರು ಹೀಗೆ ಮಾಡಿದರೇ?

ಕರ್ನಾಟಕದಲ್ಲಿ ಈಗಲೂ ಕಾವೇರಿ ವಿವಾದದ ಮಾಹಿತಿಯನ್ನು ಬೆರಳತುದಿಯಲ್ಲಿ ಇಟ್ಟುಕೊಂಡವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಈಗಲೂ ದೆಹಲಿಯಲ್ಲಿ ಅವರ ಮಾತಿಗೆ ತೂಕ ಇದೆ.
ಇಂತಹವರು ಎಲ್ಲ ಮುಗಿದ ಮೇಲೆ ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರು ಹಾಕಿ ಮುತ್ಸದ್ಧಿತನ ಮೆರೆಯುವ ಬದಲಿಗೆ ಮೊದಲೇ ಹೋಗಿ ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಬಹುದಿತ್ತಲ್ಲವೇ?
ಕೇಂದ್ರದಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದಾಗ ಅನಂತಕುಮಾರ್ ಅವರನ್ನು ಕಟ್ಟಿಕೊಂಡು ಹೋಗಿ ಆಗಿನ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರಿಗೆ ಮನವೊಲಿಸಲು ಪ್ರಯತ್ನಿಸಿರಲಿಲ್ಲವೇ? ಈ ಬಾರಿ ಯಾಕೆ ಸುಮ್ಮನಿದ್ದರು?  ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ಕಾವೇರಿ ಜನ ತಿರುಗಿಬಿದ್ದರೆ ತಮ್ಮ ಪಕ್ಷಕ್ಕೆ ಲಾಭ ಎಂಬ ರಾಜಕೀಯ ಲೆಕ್ಕಚಾರವೇನಾದರೂ ಅವರಲ್ಲಿತ್ತೇ?

ರೆಬೆಲ್‌ಸ್ಟಾರ್ ಖ್ಯಾತಿಯ ಅಂಬರೀಷ್ ಅವರು ಈಗ ಕಾವೇರಿ ಚಳವಳಿಯ ನಾಯಕರು. ಮಂಡ್ಯದ ಮತದಾರರು ಪ್ರೀತಿಯಿಂದ ಅವರನ್ನು ಆರಿಸಿ ಲೋಕಸಭೆಗೆ ಕಳುಹಿಸಿದ್ದರು. ಹತ್ತು ವರ್ಷ ಲೋಕಸಭೆಯಲ್ಲಿದ್ದ ಅವರು ರಾಜ್ಯಕ್ಕೆ ಸಂಬಂಧಿಸಿದ ಉಳಿದ ವಿಷಯ ಬಿಡಿ,ಕನಿಷ್ಠ ಕಾವೇರಿ ಬಗ್ಗೆಯಾದರೂ ಒಂದು ದಿನ ಮಾತನಾಡಿದ್ದರೇ? 
ಯುಪಿಎ ಸರ್ಕಾರ ಅವರನ್ನು ಸಚಿವರನ್ನಾಗಿ ಮಾಡಿದರೆ ಪ್ರಮಾಣವಚನ ಸ್ವೀಕರಿಸಿ ಬೆಂಗಳೂರಿಗೆ ಬಂದವರು ತಿರುಗಿ ಹೋಗಲಿಲ್ಲ.  ಕೇಂದ್ರ ಸಚಿವ ಮಂಡಳಿಯಲ್ಲಿ ರಾಜ್ಯಕ್ಕೆ ಸೇರಿರುವ ನಾಲ್ಕು ಮಂದಿ ಸಚಿವರಿದ್ದಾರೆ.  ಅವರಲ್ಲೊಬ್ಬರು ಮಂಡ್ಯದ ಮಣ್ಣಿನ ಮಗ.
ಉಳಿದವರು ಬಿಡಿ ಕನಿಷ್ಠ ಮಂಡ್ಯದ ಮಣ್ಣಿನ ಮಗನಾಗಿರುವ ಎಸ್.ಎಂ.ಕೃಷ್ಣ ಅವರಿಗೂ ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕೆಂದು ಅನಿಸಲಿಲ್ಲವೇ? ನಮ್ಮ ರೈತರು ಎಷ್ಟೊಂದು ವಿಶಾಲಹೃದಯಿಗಳೆಂದರೆ ತಮ್ಮ ಕೈಬಿಟ್ಟವರನ್ನೇ ತಲೆಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಾರೆ.
ಇನ್ನೊಂದೆಡೆ ಅನಗತ್ಯವಾಗಿ ನ್ಯಾಯಾಲಯ, ನ್ಯಾಯಮಂಡಳಿ ವಿರುದ್ಧ ಕೂಗಾಡಿ ದ್ವೇಷ ಕಟ್ಟಿಕೊಳ್ಳುತ್ತಾರೆ. ಕನ್ನಡಿಗರ ರೋಷವೇ ಹೀಗೆ, ಅದರಲ್ಲಿ ಎಲ್ಲವನ್ನೂ ಸುಟ್ಟುಹಾಕುವ ಬೆಂಕಿ ಸ್ವಲ್ಪ ಹೆಚ್ಚು, ಕತ್ತಲಲ್ಲಿಯೂ ದಾರಿ ತೋರುವ ಬೆಳಕು ಕಡಿಮೆ.  ಈ ವರ್ಷದ ಸಮಸ್ಯೆಯೇನೋ ಇನ್ನು ಕೆಲವುದಿನಗಳಲ್ಲಿ ಮುಗಿದುಹೋಗುತ್ತದೆ.

ಮುಂದಿನ ದಿನಗಳು ಇನ್ನಷ್ಟು ಗಂಡಾಂತರಕಾರಿಯಾಗಲಿವೆ. ಮುಂದೇನು? ಅರಿವಿನ ಬೆಳಕಲ್ಲಿ ನೋಡಿದರೆ ದಾರಿಗಳು ಹಲವು ಇವೆ. ಇದು ಕೇವಲ ಮೈಸೂರು-ಮಂಡ್ಯದ ರೈತರ ಸಮಸ್ಯೆ ಅಲ್ಲ. ಇದನ್ನು ತಿಳಿದುಕೊಳ್ಳಬೇಕಾದರೆ ಯಾರಾದರೂ ತೆಪ್ಪಗೆ ಕೂತು ಐದು ಸಂಪುಟಗಳಲ್ಲಿರುವ ಕಾವೇರಿ ನ್ಯಾಯಮಂಡಳಿಯ ಐತೀರ್ಪನ್ನು ಓದಬೇಕು. ಆಗಲಾದರೂ ಬುದ್ದಿ ಬರಬಹುದೇನೋ?
ರಾಜ್ಯದ ಪುನರ್‌ಪರಿಶೀಲನಾ ಅರ್ಜಿಯನ್ನೇನಾದರೂ ಸುಪ್ರೀಂಕೋರ್ಟ್ ತಿರಸ್ಕರಿಸಿ ಐತೀರ್ಪನ್ನು ಅಂತಿಮ ಎಂದು ಸಾರಿದರೆ ಮೊದಲು ನೀರಿಲ್ಲದೆ ಸಾಯುವವರು ಬೆಂಗಳೂರು ಜನ. ಈ ಮಹಾನಗರಕ್ಕಾಗಿ ನಾವು ಕೇಳಿರುವುದು 30 ಟಿಎಂಸಿಅಡಿ ಕಾವೇರಿ ನೀರು, ನ್ಯಾಯಮಂಡಳಿ ನಿಗದಿಪಡಿಸಿರುವುದು 1.75 ಟಿಎಂಸಿಅಡಿ.

ಕಷ್ಟ ಹಂಚಿಕೊಳ್ಳುವುದು ಸುಖ ಹಂಚಿಕೊಳ್ಳುವಷ್ಟು ಸುಲಭ ಅಲ್ಲ September 17, 2012

ಕಾವೇರಿ ನದಿನೀರು ಹಂಚಿಕೆಯ ವಿವಾದವನ್ನು ಕೊರಳಿಗೆ ಸುತ್ತಿಕೊಂಡು ಎರಡು ಶತಕಗಳಿಗಿಂತಲೂ ಹೆಚ್ಚು ಕಾಲ ಸುಸ್ತಾಗುವಷ್ಟು ಜಗಳವಾಡಿ, ಹಳ್ಳಿಯಿಂದ ದಿಲ್ಲಿ ವರೆಗೆ ಸುತ್ತಾಡಿ, ಇಷ್ಟ ಬಂದಷ್ಟು ಖರ್ಚು ಮಾಡಿದರೂ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಕರ್ನಾಟಕ ಮತ್ತು ತಮಿಳುನಾಡಿಗೆ ಸಾಧ್ಯವಾಗಿಲ್ಲ. 

ಈಗ ಎರಡೂ ರಾಜ್ಯಗಳು ಹೊರಟ ಜಾಗದಲ್ಲಿಯೇ ಮತ್ತೆ ಬಂದು ನಿಂತಿವೆ. 1799ರಲ್ಲಿ ಆಗಿನ ಮೈಸೂರು ರಾಜ್ಯದಲ್ಲಿ ಕೆರೆಗಳ ದುರಸ್ತಿಯನ್ನು ವಿರೋಧಿಸಿ ತಂಜಾವೂರು ಜಿಲ್ಲೆಯ ರೈತರು ಮೊದಲ ಬಾರಿ ನಡೆಸಿದ ಪ್ರತಿಭಟನೆಯ ದಿನದಿಂದ ಪ್ರಾರಂಭವಾಗಿರುವ ನೀರಿನ ಜಗಳ ಇನ್ನೂ ನಿಂತಿಲ್ಲ. 

ಇದೇ ಸೆಪ್ಟೆಂಬರ್ 19ರಂದು ನಡೆಯಲಿರುವ ಪ್ರಧಾನಿ ಅಧ್ಯಕ್ಷರಾಗಿರುವ ಮತ್ತು ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರಾಗಿರುವ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ಮತ್ತೊಂದು ಸುತ್ತಿನ ಕಾದಾಟಕ್ಕೆ ಎರಡೂ ರಾಜ್ಯಗಳು ತಾಲೀಮು ನಡೆಸತೊಡಗಿವೆ.

ಸುಪ್ರೀಂಕೋರ್ಟ್ ಆದೇಶದಂತೆಯೇ ರಚನೆಯಾದ ಕಾವೇರಿ ನ್ಯಾಯಮಂಡಳಿ ಅಂತಿಮ ಐತೀರ್ಪು ನೀಡಿದ ನಂತರವೂ ಮೂಲವಿವಾದ ಬಗೆಹರಿದಿಲ್ಲ ಎನ್ನುವುದಕ್ಕೆ ಈಗಿನ ಜಗಳವೇ ಸಾಕ್ಷಿ. `ಮಳೆಗಾಲದಲ್ಲಿ ನೂರಾರು ನೆಂಟರು, ಬರಗಾಲ ಅನಾಥ` ಎಂಬಂತಾಗಿದೆ ಕಾವೇರಿ ಕಣಿವೆಯ ರೈತರ ಸ್ಥಿತಿ. ಹದಿನಾರು ವರ್ಷಗಳಷ್ಟು ದೀರ್ಘಕಾಲ ಅಳೆದು, ತೂಗಿ, ಸೋಸಿ ನೀಡಿದ ಅಂತಿಮ ಐತೀರ್ಪು ಕೊನೆಗೂ ಮಳೆಬಂದ ದಿನಗಳಲ್ಲಿ ನೀರನ್ನು ಹಂಚಿಕೊಳ್ಳುವುದು ಹೇಗೆ ಎಂಬುದನ್ನಷ್ಟೇ ಹೇಳಿದ್ದು. 

ಇದಕ್ಕಿಂತಲೂ ಮುಖ್ಯವಾಗಿ ಮಳೆ ಇಲ್ಲದ ದಿನಗಳ ಸಂಕಷ್ಟವನ್ನು ಹಂಚಿಕೊಳ್ಳುವುದು ಹೇಗೆ ಎಂಬುದನ್ನು ನ್ಯಾಯಮಂಡಳಿ ಹೇಳಬೇಕಾಗಿತ್ತು. ಆದರೆ `ಮಳೆ ಕೊರತೆಯ ವರ್ಷದಲ್ಲಿ ಕಡಿಮೆಯಾಗುವ ನೀರಿನ ಉತ್ಪನ್ನದ ಅನುಪಾತಕ್ಕೆ ಅನುಗುಣವಾಗಿ ಬಿಡಬೇಕಾಗಿರುವ ನೀರಿನ ಪಾಲು ಕಡಿಮೆಯಾಗಲಿದೆ` ಎಂದಷ್ಟೇ ಹೇಳಿರುವ ನ್ಯಾಯಮಂಡಳಿ ಇದಕ್ಕೊಂದು ಸ್ಪಷ್ಟವಾದ ಸೂತ್ರ ಇಲ್ಲವೇ ಮಾರ್ಗಸೂಚಿಯನ್ನು ನೀಡದೆ ಜಾರಿಕೊಂಡಿದೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ನೀರಿನ ಜಗಳವನ್ನು ಇನ್ನಷ್ಟು ಸರಳವಾಗಿ ವ್ಯಾಖ್ಯಾನಿಸುವುದಾದರೆ ಇದು ಮುಖ್ಯವಾಗಿ `ಮಳೆ ಇಲ್ಲದ ಕಷ್ಟದ ದಿನಗಳಲ್ಲಿನ ನೀರು ಹಂಚಿಕೆಯ ಸಮಸ್ಯೆ`. ಸಮೃದ್ಧವಾಗಿ ಮಳೆ ಬಿದ್ದಾಗ ನೀರು ಹರಿಸಲು ಕರ್ನಾಟಕ ತಕರಾರು ಮಾಡುವುದಿಲ್ಲ, ನೀರು ಬಿಡಲೇಬೇಕೆಂದು ತಮಿಳುನಾಡು ಕೂಡಾ ಹಟ ಹಿಡಿಯುವುದಿಲ್ಲ. 

1991ರಲ್ಲಿ ಮಧ್ಯಂತರ ಐತೀರ್ಪು ನೀಡಿದ ನಂತರದ ಇಪ್ಪತ್ತೊಂದು ವರ್ಷಗಳಲ್ಲಿ ನಾಲ್ಕು ವರ್ಷಗಳನ್ನು ( 2001-02: 189 ಟಿಎಂಸಿ, 2002-03: 109.45 ಟಿಎಂಸಿ, 2003-04: 75.87 ಟಿಎಂಸಿ ಮತ್ತು 2004-05: 185.55 ಟಿಎಂಸಿ) ಹೊರತುಪಡಿಸಿ ಉಳಿದೆಲ್ಲ ವರ್ಷಗಳಲ್ಲಿ ನ್ಯಾಯಮಂಡಳಿಯ ಐತೀರ್ಪಿನ ಪ್ರಕಾರ ಹರಿಸಬೇಕಾಗಿರುವ 192 ಟಿಎಂಸಿಗಿಂತಲೂ ಹೆಚ್ಚು ನೀರು ಕರ್ನಾಟಕದಿಂದ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದುಹೋಗಿದೆ. 

ವಿವಾದ ಒಟ್ಟು ನೀರಿನ ಪಾಲಿಗೆ ಸಂಬಂಧಿಸಿದ್ದಲ್ಲ, ಅದು ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಹರಿಸಬೇಕಾಗಿರುವ ನೀರಿನ ಪಾಲಿನದ್ದು. ಇದರಿಂದಾಗಿಯೇ ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ಎರಡು ರಾಜ್ಯಗಳ ನಡುವೆ ಸಂಘರ್ಷದ ಕಿಡಿಹಾರುತ್ತಿರುವುದು.

ಇದು ಗೊತ್ತಿದ್ದರೂ ಇದಕ್ಕೊಂದು ಸರ್ವಸಮ್ಮತ ಪರಿಹಾರವನ್ನು ಸೂಚಿಲು ಸಾಧ್ಯವಾಗದೆ ಇರುವುದು ಕಾವೇರಿ ನ್ಯಾಯಮಂಡಳಿಯ ದೊಡ್ಡ ವೈಫಲ್ಯ. `ಮಳೆ ಕೊರತೆಯ ದಿನಗಳಲ್ಲಿ ಬಳಸಲು ಸಾಧ್ಯವಾಗುವಂತೆ ಉತ್ತಮ ಮಳೆಯ ಸಾಮಾನ್ಯ ಜಲವರ್ಷದ ಕೊನೆಯಲ್ಲಿ ಜಲಾಶಯಗಳಲ್ಲಿ ಸಾಧ್ಯ ಇದ್ದಷ್ಟು ನೀರಿನ ಸಂಗ್ರಹ ಇಟ್ಟುಕೊಳ್ಳಬೇಕು. 

ಸತತ ಎರಡು ವರ್ಷ ಮಳೆ ಕೊರತೆ ಕಾಣಿಸಿಕೊಂಡಲ್ಲಿ ಕಾವೇರಿ ಜಲನಿರ್ವಹಣಾ ಮಂಡಳಿ ಇಲ್ಲ ಕಾವೇರಿ ನದಿ ಪ್ರಾಧಿಕಾರ ನೀರು ಬಿಡುಗಡೆಯ ಮಾಸಿಕ ಕಂತುಗಳ ಪ್ರಮಾಣವನ್ನು ಕಡಿಮೆಗೊಳಿಸಬಹುದು` ಎಂದಷ್ಟೇ ಅಂತಿಮ ಐತೀರ್ಪು ಹೇಳಿದೆ ( ಐದನೆ ಸಂಪುಟ, ಪುಟ 213). ಸ್ಪಷ್ಟ ಪರಿಹಾರದ ಮಾರ್ಗವನ್ನು ಅದು ತೋರಿಸಿಲ್ಲ.

ಜೂನ್-ಸೆಪ್ಟೆಂಬರ್ ವರೆಗಿನ ವಿವಾದಾತ್ಮಕ ನಾಲ್ಕು ತಿಂಗಳ ಅವಧಿಯಲ್ಲಿ ಕರ್ನಾಟಕ 137 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಮಧ್ಯಂತರ ಐತೀರ್ಪು ಹೇಳಿತ್ತು. ಅದರಲ್ಲಿ ಮೂರು ಟಿಎಂಸಿಯನ್ನಷ್ಟೇ ಕಡಿಮೆ ಮಾಡಿರುವ ಅಂತಿಮ ಐತೀರ್ಪು ವಿವಾದದ ಮೂಲಕಾರಣವನ್ನು ಜೀವಂತವಾಗಿ ಇಟ್ಟಿದೆ. 

ಜೂನ್‌ನಿಂದ ಸೆಪ್ಟೆಂಬರ್ ವರೆಗೆ 100 ಟಿಎಂಸಿ ಅದರ ನಂತರ 92 ಟಿಎಂಸಿ ನೀರು ಹರಿಸಿ ಎಂದು ನ್ಯಾಯಮಂಡಳಿ ಹೇಳಿದ್ದರೂ ವಿವಾದದ ಇತ್ಯರ್ಥಕ್ಕೆ ನೆರವಾಗುತ್ತಿತ್ತೊ ಏನೋ? ತಮಿಳುನಾಡು ಖುದ್ದಾಗಿ ಒಪ್ಪಿಕೊಂಡ 20 ಟಿಎಂಸಿ ಅಂತರ್ಜಲದ ಬಳಕೆಯನ್ನು ಗಣನೆಗೆ ತೆಗೆದುಕೊಂಡಿದ್ದರೂ ಕರ್ನಾಟಕದ ಮೇಲಿನ ಅಷ್ಟು ಭಾರ ಕಡಿಮೆಯಾಗಲು ಸಾಧ್ಯ ಇತ್ತು.

ನ್ಯಾಯಮಂಡಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡ ಕಾರಣದಿಂದಾಗಿ ಮಧ್ಯಂತರ ಐತೀರ್ಪಿನಲ್ಲಿ ಹೇಳಿರುವಂತೆ ಮಳೆ ಇಲ್ಲದ ಕಾಲದಲ್ಲಿ ಸಂಕಷ್ಟ ಹಂಚಿಕೆ ಸೂತ್ರವನ್ನು ರೂಪಿಸುವ ಜವಾಬ್ದಾರಿ 1998ರಲ್ಲಿ ರಚನೆಗೊಂಡ ಪ್ರಧಾನಿ ಅಧ್ಯಕ್ಷತೆಯ ಕಾವೇರಿ ನದಿ ಪ್ರಾಧಿಕಾರದ್ದಾಗಿದೆ. ನ್ಯಾಯಮಂಡಳಿ ತನಗೊಪ್ಪಿಸಿರುವ ಜವಾಬ್ದಾರಿಯ ನಿರ್ವಹಣೆಗಾಗಿ ಕಾವೇರಿ ಉಸ್ತುವಾರಿ ಸಮಿತಿಯನ್ನು ಪ್ರಾಧಿಕಾರ ರಚಿಸಿದೆ. 

ಉಸ್ತುವಾರಿ ಸಮಿತಿ ಇದಕ್ಕಾಗಿ ತಾಂತ್ರಿಕ ಸಮಿತಿಯನ್ನು ರಚಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆಯ ವಿವಾದವನ್ನು ಇತ್ಯರ್ಥಗೊಳಿಸಬೇಕಾಗಿರುವ ಸುಪ್ರೀಂಕೋರ್ಟ್‌ನ ಆದೇಶದ ಮೂಲಕ ರಚನೆಗೊಂಡ ನ್ಯಾಯಮಂಡಳಿಯ ಹೊಣೆ ಅಂತಿಮವಾಗಿ ಒಂದಷ್ಟು ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ಸಮಿತಿಯ ಹೆಗಲ ಮೇಲೆ ಬಂದು ಕೂತಿದೆ. ಕಳೆದ ಹನ್ನೆರಡು ವರ್ಷಗಳಿಂದ ಈ ತಾಂತ್ರಿಕ ಸಮಿತಿ `ಸಂಕಷ್ಟ ಹಂಚಿಕೆಯ ಸೂತ್ರ`ಗಳನ್ನು ಹೆಣೆಯುತ್ತಲೇ ಇದ್ದರೂ ಅದಕ್ಕೆ ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳನ್ನು ಒಪ್ಪಿಸಲು ಸಾಧ್ಯವಾಗಿಲ್ಲ. 

ಈ ಬಾರಿ ಕೂಡಾ ಕರ್ನಾಟಕದಲ್ಲಿ ನಡೆದ ಸರ್ವಪಕ್ಷಗಳ ಸಭೆ `ಸಂಕಷ್ಟ ಹಂಚಿಕೆ ಸೂತ್ರ`ವನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯದೊಂದಿಗೆ ಬರ್ಖಾಸ್ತುಗೊಂಡಿದೆ. ಇದರಿಂದಾಗಿ ವಿವಾದ ಪ್ರಾಧಿಕಾರದ ಹೊಸ್ತಿಲಲ್ಲಿ ಬಂದು ನಿಂತಿದೆ.
ತಮಿಳುನಾಡಿನ ರಾಜಕೀಯ ಒತ್ತಡಕ್ಕೆ ಈಡಾಗುತ್ತ ಬಂದಿರುವ ಕಾವೇರಿ ನದಿ ಪ್ರಾಧಿಕಾರ ಇಲ್ಲಿಯ ವರೆಗೆ ರಚಿಸಿದ ಸಂಕಷ್ಟ ಹಂಚಿಕೆಯ ಕರಡು ಸೂತ್ರಗಳೆಲ್ಲವೂ ತಮಿಳುನಾಡಿನ ರೈತರ ಹಿತವನ್ನಷ್ಟೇ ಕಾಯಲು ರೂಪುಗೊಂಡಿರುವಂತಹದ್ದು ಎಂದು ಹೇಳಲು ಆಧಾರಗಳಿವೆ. 

ಕರ್ನಾಟಕ ನೀಡಿರುವ ಸಲಹೆಗಳನ್ನು ಪ್ರಾಧಿಕಾರದಿಂದ ನೇಮಕಗೊಂಡ ತಾಂತ್ರಿಕ ಸಮಿತಿ ಪರಿಗಣಿಸಿಯೇ ಇಲ್ಲ. ಅವುಗಳು ಹೀಗಿವೆ:

-ಕರ್ನಾಟಕದಲ್ಲಿ ಬಹುಪಾಲು ಮಳೆಯನ್ನು ತಂದುಕೊಡುವ ನೈರುತ್ಯ ಮಾರುತದ ಮಳೆಯನ್ನಷ್ಟೇ ಪರಿಗಣಿಸದೆ ತಮಿಳುನಾಡಿನಲ್ಲಿ ಅಕ್ಟೋಬರ್ ಮಧ್ಯಭಾಗದಿಂದ ಜನವರಿ ವರೆಗೆ ಸುರಿಯವ ಈಶಾನ್ಯ ಮಾರುತವನ್ನೂ ಪರಿಗಣಿಸಬೇಕು. ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ರೈತರು ಕುರುವೈ ಬೆಳೆಗೆ ನೈರುತ್ಯ ಮಾರುತವನ್ನು ಅವಲಂಬಿಸಿದ್ದರೆ ನಂತರ ಬೆಳೆಯುವ ಸಾಂಬಾ ಬೆಳೆಗೆ ಬೇಕಾಗಿರುವ ಮಳೆಯ ಮೂರನೆ ಎರಡರಷ್ಟರನ್ನು ಈಶಾನ್ಯ ಮಾರುತದಿಂದ ಪಡೆಯುತ್ತಾರೆ. 

ಇಲ್ಲಿಯ ವರೆಗಿನ ಸಂಕಷ್ಟ ಹಂಚಿಕೆ ಸೂತ್ರಗಳು ಈಶಾನ್ಯ ಮಾರುತವನ್ನು ಪರಿಗಣಿಸಿಲ್ಲ. ( ಪ್ರತಿವರ್ಷ ಕಾವೇರಿ ಕಣಿವೆಯ ಎಲ್ಲ ಜಲಾಶಯಗಳ ನೀರು ಸಂಗ್ರಹ ಮತ್ತು ಜೂನ್ ಒಂದರಿಂದ ಅಕ್ಟೋಬರ್ 15ರ ವರೆಗಿನ ನೈರುತ್ಯ ಮಾರುತ ಮತ್ತು ಅಕ್ಟೋಬರ್ 16ರಿಂದ ಜನವರಿ 31ರ ವರೆಗಿನ ಈಶಾನ್ಯ ಮಾರುತದ ಮಳೆಯನ್ನು ದಾಖಲಿಸುವ ಹೊಣೆಯನ್ನು ನ್ಯಾಯಮಂಡಳಿ ಅಂತಿಮ ಐತೀರ್ಪಿನಲ್ಲಿ ಕಾವೇರಿ ನಿಯಂತ್ರಣಾ ಪ್ರಾಧಿಕಾರ ಮತ್ತು ನಿರ್ವಹಣಾ ಸಮಿತಿಗೆ ಒಪ್ಪಿಸಿರುವುದು ಕರ್ನಾಟಕದ ಈ ಸಲಹೆಗೆ ಬಲ ತಂದುಕೊಟ್ಟಿದೆ.)

-ನೈರುತ್ಯ ಮಾರುತ ಕೊನೆಗೊಳ್ಳುವ ಸೆಪ್ಟೆಂಬರ್ ತಿಂಗಳ ಅಂತ್ಯದ ವರೆಗಿನ ನೀರಿನ ಕೊರತೆಯನ್ನಷ್ಟೇ ಲೆಕ್ಕ ಹಾಕಿ ಅಲ್ಲಿಂದ ನಂತರದ ದಿನಗಳ ಸಂಕಷ್ಟವನ್ನು ಹಂಚಿಕೊಳ್ಳಬೇಕೆಂಬ ಸೂತ್ರ ಸರಿ ಅಲ್ಲ. ನ್ಯಾಯಮಂಡಳಿ ಐತೀರ್ಪು ನೀಡುವಾಗ ಜೂನ್‌ನಿಂದ ಡಿಸೆಂಬರ್ ವರೆಗೆ ಬಿಟ್ಟ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡಿದ್ದು ಸಂಕಷ್ಟ ಸ್ಥಿತಿಯ ಅಂದಾಜಿಗೆ ನೀರಿನ ಕೊರತೆಯನ್ನು ಲೆಕ್ಕ ಹಾಕುವಾಗಲೂ ಆ ಅವಧಿಯನ್ನೇ (ಜೂನ್-ಡಿಸೆಂಬರ್) ಪರಿಗಣಿಸಬೇಕು.

-ಸಂಕಷ್ಟ ಹಂಚಿಕೆ ಸೂತ್ರ ರಚಿಸುವಾಗ ಕರ್ನಾಟಕದ ನಾಲ್ಕು ಜಲಾಶಯಗಳ ಜಲಾನಯನ ಪ್ರದೇಶವನ್ನಷ್ಟೇ ಪರಿಗಣಿಸದೆ ತಮಿಳುನಾಡಿನ ಜಲಾಶಯಗಳ ನೀರು ಸಂಗ್ರಹವನ್ನೂ ಪರಿಗಣಿಸಬೇಕು. ನೀರಾವರಿ ವರ್ಷದ ಪ್ರಾರಂಭದಲ್ಲಿ ಮೆಟ್ಟೂರು ಜಲಾಶಯದಲ್ಲಿ ಸಂಗ್ರಹ ಇರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳಬೇಕು. 

ನರ್ಮದಾ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಗೊಳಿಸಿದ್ದ ನ್ಯಾಯಮಂಡಳಿ `..ನಿರ್ದಿಷ್ಠ ನೀರಾವರಿ ವರ್ಷದಲ್ಲಿ ಬಳಕೆಗೆ ಲಭ್ಯ ಇರುವ ನೀರಿನ ಪ್ರಮಾಣದಲ್ಲಿ ಹಿಂದಿನ ವರ್ಷದ ಮಿಗತೆ ನೀರಿನ ಪ್ರಮಾಣ ಕೂಡಾ ಸೇರಿದೆ..` ಎಂದು ತನ್ನ ಐತೀರ್ಪಿನಲ್ಲಿ ಹೇಳಿದೆ.

- ಕೇಂದ್ರ ಜಲ ಆಯೋಗದ ನಿಯಂತ್ರಣದಲ್ಲಿರುವ ಬಿಳಿಗುಂಡ್ಲು ಜಲಮಾಪನ ಕೇಂದ್ರ ಮತ್ತು ಮೆಟ್ಟೂರು ಜಲಾಶಯದ ನಡುವೆ 5535 ಚದರ ಕಿ.ಮೀ. ವಿಸ್ತೀರ್ಣದ ಜಲಾನಯನ ಪ್ರದೇಶ ಇದೆ. ಸಂಕಷ್ಟದ ಸ್ಥಿತಿಯನ್ನು ಲೆಕ್ಕಹಾಕುವಾಗ ಈ ಜಲಾನಯನ ಪ್ರದೇಶದಲ್ಲಿ ಪ್ರತಿ ಜಲವರ್ಷ ಉತ್ಪತ್ತಿಯಾಗುವ ಸುಮಾರು 25 ಟಿಎಂಸಿ ನೀರನ್ನು ಗಣನೆಗೆ ತೆಗೆದುಕೊಳ್ಳಬೇಕು.

-ತಮಿಳುನಾಡಿಗೆ ಬಿಟ್ಟ ನೀರಿನ ಲೆಕ್ಕವನ್ನು ಬಿಳಿಗುಂಡ್ಲುವಿನಲ್ಲಿರುವ ಕೇಂದ್ರ ಜಲ ಆಯೋಗದ ಜಲಮಾಪನ ಕೇಂದ್ರದ ಆಧಾರದಲ್ಲಿಯೇ ನಡೆಸಬೇಕು. ಮೆಟ್ಟೂರಿನಲ್ಲಿ ಅಧಿಕೃತ ಜಲಮಾಪನ ವ್ಯವಸ್ಥೆಯೇ ಇಲ್ಲದೆ ಇರುವುದರಿಂದ ಅಲ್ಲಿನ ನೀರಿನ ದಾಖಲೆಯನ್ನು ಪರಿಗಣಿಸುವುದು ಸರಿ ಅಲ್ಲ. (ಬಿಳಿಗುಂಡ್ಲು ಜಲಮಾಪನದ ನೀರಿನ ಲೆಕ್ಕವೇ ಅಧಿಕೃತ ಎಂದು ನ್ಯಾಯಮಂಡಳಿಯ ಅಂತಿಮ ಐತೀರ್ಪಿನಲ್ಲಿ ಹೇಳಿರುವುದು ಈ ಸಲಹೆಗೆ ಪೂರಕವಾಗಿದೆ.)

-ಎರಡು ಗರಿಷ್ಠ ಮತ್ತು ಎರಡು ಕನಿಷ್ಠ ಮಳೆಯ ವರ್ಷಗಳ ಸರಾಸರಿಯನ್ನು ಪರಿಗಣಿಸದೆ, 1974ರಿಂದ ಈ ವರೆಗಿನ ಮಳೆ ಸರಾಸರಿಯನ್ನು ಗಣನೆಗೆ ತೆಗೆದುಕೊಳ್ಳಬೇಕು.
ಕಾವೇರಿ ನದಿ ಪ್ರಾಧಿಕಾರದ ಕಾರ್ಯನಿರ್ವಹಣೆಯನ್ನು ಕಳೆದ ಹನ್ನೆರಡು ವರ್ಷಗಳಿಂದ ಗಮನಿಸುತ್ತಾ ಬಂದ ಯಾರು ಕೂಡಾ ಕರ್ನಾಟಕದ ಈ ಸಲಹೆಗಳಿಗೆ ಮಾನ್ಯತೆ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯ ಇಲ್ಲ. 

ಸೂತ್ರ ರಚನೆ ತಾಂತ್ರಿಕ ಸ್ವರೂಪದ್ದಾಗಿದ್ದರೂ ಅಂತಿಮವಾಗಿ ಅದೊಂದು ರಾಜಕೀಯ ತೀರ್ಮಾನವಾಗಿರುವುದು ಪರಿಹಾರ ಕಗ್ಗಂಟಾಗಲು ಕಾರಣ. ಮಳೆಯ ಪ್ರಮಾಣ, ಜಲಾಶಯದಲ್ಲಿ ನೀರಿನ ಸಂಗ್ರಹ ಮತ್ತು ರೈತರ ನೀರಿನ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಸೂತ್ರ ರಚನೆಯಾಗಬೇಕಾಗಿದ್ದರೂ ಅಲ್ಲಿ ಮುಖ್ಯವಾಗಿ ಗಣನೆಗೆ ಬರುವುದು ರಾಜಕೀಯ ಲೆಕ್ಕಾಚಾರ.

ಕೇಂದ್ರ ಸರ್ಕಾರವನ್ನು ಸದಾ ತನ್ನ ಋಣದ ಉರುಳಲ್ಲಿ ಇಟ್ಟುಕೊಂಡಿರುವ ತಮಿಳುನಾಡು, ರಾಜಕೀಯ ಬಲಾಬಲದ ಪರೀಕ್ಷೆ ಎದುರಾದಾಗೆಲ್ಲ ಸುಲಭದಲ್ಲಿ ಕರ್ನಾಟಕವನ್ನು ಹಿಂದಕ್ಕೆ ತಳ್ಳುತ್ತಾ ಬಂದಿದೆ. ಈ ಬಾರಿಯೂ ಹಾಗಾಗುವುದಿಲ್ಲ ಎನ್ನುವುದಕ್ಕೆ ಪ್ರಬಲವಾದ ಯಾವ ಕಾರಣಗಳೂ ಹೊಳೆಯುತ್ತಿಲ್ಲ. ರಾಜಕೀಯವಾಗಿ ಕರ್ನಾಟಕ ಇಂದಿನಷ್ಟು ದುರ್ಬಲ ಹಿಂದೆಂದೂ ಆಗಿರಲಿಲ್ಲ.

ಸಕೀನಾಬಾಯಿ ನಂಬಿಕೆ ಉಳಿಸಿದ ಶಿವ September 10, 2012

ನರೋಡಾ ಪಾಟಿಯಾ ಹತ್ಯಾಕಾಂಡದ ಅಪರಾಧಿಗಳಿಗೆ ಗುಜರಾತ್ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದ್ದನ್ನು ಕೇಳಿದಾಗ ನನಗೆ ನೆನಪಾದವರು ಸಕೀನಾ ಬಾಯಿ. ಐದು ವರ್ಷಗಳ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆಯ ಸಮೀಕ್ಷೆಗೆಂದು ಹೋದವನಿಗೆ ನರೋಡಾ ಪಾಟಿಯಾದಲ್ಲಿ ಭೇಟಿಯಾಗಿದ್ದ ಸಕೀನಾಬಾಯಿ ಹಳೆಯ ದಿನಗಳನ್ನು ಮೆಲುಕುಹಾಕುತ್ತಾ `ನಾವೆಲ್ಲ ಒಂದು ಕುಟುಂಬದ ರೀತಿ ಇದ್ದವರು, ಆ ಕಾಲ ಹೊರಟೋಯ್ತು, ಈಗ ಎಲ್ಲೋ ಗಲಭೆ ನಡೆದ ಗಾಳಿಸುದ್ದಿ ಬಂದರೂ ಎದೆ ನಡ್‌ಗತೈತಿ. ಯಾರ ಮೇಲೂ ನಂಬಿಕೆ ಬರೋಲ್ಲ, ಆ ಶಿವನೇ ಕಾಯಬೇಕು` ಎಂದಿದ್ದರು ಅಚ್ಚ ಕನ್ನಡದಲ್ಲಿ. (ಪ್ರಜಾವಾಣಿ ವರದಿ: 15.12.2007). ಮುಸ್ಲಿಂ ಧರ್ಮಕ್ಕೆ ಸೇರಿದವರೆಂಬ ಕಾರಣಕ್ಕಾಗಿ `ಹಿಂದೂ ಶಿವ`ಯಾದಗೀರ್ ತಾಲ್ಲೂಕಿನ ಅತ್ತಿಗುಣಿಯ ಸಕೀನಾಬಾಯಿಯ ಕೈಬಿಡಲಿಲ್ಲ. ಅವರು ತನ್ನ ಮೇಲೆ ಇಟ್ಟ ನಂಬಿಕೆಯನ್ನು ಹುಸಿಮಾಡದೆ `ನ್ಯಾಯದೇವತೆಯ ಕಣ್ಣು ತೆರೆಸಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ.`

ಆದರೆ ನ್ಯಾಯಕ್ಕೆ ಸಿಕ್ಕಿದ ಈ ಜಯಕ್ಕಾಗಿ ಉಳಿದೆಲ್ಲರಿಗಿಂತ ಹೆಚ್ಚು ಸಂತಸ ಪಡಬೇಕಾದವರು ತಾವು ಎಂದು ಕರ್ನಾಟಕದ ಬಹಳಷ್ಟು ಜನರಿಗೆ ತಿಳಿದಿಲ್ಲ. 35 ಮಕ್ಕಳು, 32 ಮಹಿಳೆಯರು ಮತ್ತು 30 ಗಂಡಸರು ಸೇರಿದಂತೆ ನರೋಡಾ ಪಾಟಿಯಾದಲ್ಲಿ ಹತ್ಯೆಗೀಡಾದವರ ಅಧಿಕೃತ ಸಂಖ್ಯೆ 97. ಇವರಲ್ಲಿ ಹೆಚ್ಚಿನವರು ಕರ್ನಾಟಕ ಮತ್ತು ಮಹಾರಾಷ್ಟ್ರ ಮೂಲದವರು. ಹುಬ್ಬಳ್ಳಿ, ಧಾರವಾಡ, ಹಾನಗಲ್, ಸುರಪುರ, ಶಹಪುರ, ಜೇವರ್ಗಿ, ಯಾದಗೀರ್ ಕಡೆಗಳಿಂದ ವರ್ಷಗಳ ಹಿಂದೆ ಅಲ್ಲಿಗೆ ವಲಸೆ ಹೋದವರಿದ್ದಾರೆ. ಸಕೀನಾಬಾಯಿಯಂತೆ ಅಚ್ಚಕನ್ನಡ ಮಾತನಾಡುವವರು ಈಗಲೂ ಅಲ್ಲಿದ್ದಾರೆ. ಇದಕ್ಕಾಗಿಯೇ ಸ್ಥಳೀಯರು ನರೋಡಾ ಪಾಟಿಯಾಕ್ಕೆ `ಛೋಟಾ ಕರ್ನಾಟಕ್` ಎನ್ನುತ್ತಾರೆ.  ಊರಲ್ಲಿ ನೇಕಾರಿಕೆ ಮಾಡುತ್ತಿದ್ದ ಇವರು  ಕೈಮಗ್ಗ ನಿಂತುಹೋದ ಮೇಲೆ ಅಹಮದಾಬಾದ್‌ಗೆ ಹೋಗಿ ಬಟ್ಟೆಗಿರಣಿಗಳಲ್ಲಿ ಸೇರಿಕೊಂಡಿದ್ದರು. ಗಿರಣಿಗಳು ಯಾಂತ್ರಿಕೃತಗೊಳ್ಳುತ್ತಿದ್ದಂತೆಯೇ ಅದಕ್ಕೆ ಬೇಕಾದ ಕೌಶಲ ಇಲ್ಲದೆ ನಿರುದ್ಯೋಗಿಗಳಾಗಿ ಅನಿವಾರ್ಯವಾಗಿ ಟೈಲರಿಂಗ್, ಲಾರಿ-ಅಟೋರಿಕ್ಷಾ ಓಡಿಸುವುದು, ಮಾಂಸ ಮಾರಾಟ, ಎಲೆಕ್ಟ್ರಿಕಲ್ ರಿಪೇರಿ ಮೊದಲಾದ ಸಣ್ಣಪುಟ್ಟ ವೃತ್ತಿಯಲ್ಲಿ ತೊಡಗಿಸಿಕೊಂಡು ಬಡತನದ ನಡುವೆಯೂ ತಮ್ಮ ಪಾಡಿಗೆ ತಾವಿದ್ದರು. ಹತ್ತು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ಒಂದು ದಿನ ಅವರ ಬದುಕಿಗೆ ಬೆಂಕಿ ಬಿತ್ತು. ಕೋಮುಗಲಭೆಯ ನಂತರ ಶಹಾ ಅಲಂ ನಿರಾಶ್ರಿತರ ಶಿಬಿರದಲ್ಲಿ ಭೇಟಿಯಾಗಿದ್ದ ಸುರಪುರ ತಾಲ್ಲೂಕಿನ ಜೈನುಲ್ಲಾ ನನ್ನ ಕೈಹಿಡಿದು  `ಸಾಯಲಿಕ್ಕೆ ಇಲ್ಲಿಗೆ ಬರಬೇಕಿತ್ತಾ?` ಎಂದು ಕೇಳಿದ್ದು (ಪ್ರಜಾವಾಣಿ ವರದಿ, ಮಾರ್ಚ್ 8, 2002)  ಕಿವಿಯಲ್ಲಿ ಈಗಲೂ ಗುಂಯ್‌ಗುಡುತ್ತಿದೆ.

ಅಹಮದಾಬಾದ್ ನಗರದಿಂದ ಸುಮಾರು 15 ಕಿ.ಮೀ.ದೂರದ ಹೊರವಲಯದಲ್ಲಿರುವ ನರೋಡಾ ಪಾಟಿಯಾಕ್ಕೂ ಗೋಧ್ರಾಹತ್ಯಾಕಾಂಡಕ್ಕೂ ಸಂಬಂಧವೇ ಇಲ್ಲ. ಇದು ಆ ಪ್ರಕರಣದ ವಿಚಾರಣೆಯಲ್ಲಿಯೂ ಸಾಬೀತಾಗಿದೆ. `ಪ್ರತೀಕಾರ`ಕ್ಕಾಗಿ ನರೋಡಾಪಾಟಿಯಾವನ್ನೇ ಆರಿಸಿಕೊಳ್ಳಲು ಮುಖ್ಯವಾಗಿ ಎರಡು ಕಾರಣ. ಮೊದಲನೆಯದು ಒಂದೇ ಕಡೆ ಸುಲಭದಲ್ಲಿ ನೂರಾರು  ಮುಸ್ಲಿಂ ತಲೆಗಳು ಸಿಗುತ್ತವೆ ಎಂಬ ದುಷ್ಟ ಮನಸ್ಸಿನ ಯೋಚನೆ. ಸುಮಾರು 15 ಸಾವಿರ ಜನಸಂಖ್ಯೆಯ ನರೋಡಾಪಾಟಿಯಾ ಬಡಾವಣೆಗೆ ಸೇರಿರುವ ಹುಸೇನ್‌ನಗರ, ಜವಾಹರ ನಗರ, ಪಂಡಿತ್ ಕೀ ಚಾಳ್, ಮಸ್ಜೀದ್‌ಗಲ್ಲಿಗಳಲ್ಲಿ ಸುಮಾರು 250-300  ಮುಸ್ಲಿಂ ಕುಟುಂಬಗಳಿವೆ. ಅಲ್ಲಿರುವ ಹಿಂದೂ ಕುಟುಂಬಗಳ ಸಂಖ್ಯೆ 25 ಕೂಡಾ ದಾಟಲಾರದು. ನರೋಡಾ ಪಾಟಿಯಾದ ಈ ಚಾಳ್‌ಗಳನ್ನು ಗಂಗೋತ್ರಿ ಸೊಸೈಟಿ ಮತ್ತು ಗೋಪಿನಾಥ್ ಸೊಸೈಟಿ ಎಂಬ ಎರಡು ವಸತಿಸಂಕೀರ್ಣಗಳು ಸುತ್ತುವರಿದಿವೆ. 

`ರಕ್ಷಣೆ ಕೋರಿ ಓಡಿ ಬಂದ ನಮ್ಮನ್ನು ಪೊಲೀಸರು ಕತ್ತಲಾದ ಮೇಲೆ ಬೇರೆ ಕಡೆ ಸಾಗಿಸುತ್ತೇವೆ ಎಂದು ಹೇಳಿ ಒಂದು ಕಡೆ ಸೇರಿಸಿಬಿಟ್ಟಿದ್ದರು. ಎರಡು ವಸತಿಸಂಕೀರ್ಣಗಳ ನಡುವಿನ ಓಣಿಯಲ್ಲಿ ಸೇರಿದ್ದ ನಮ್ಮ ಮೇಲೆ ಕಟ್ಟಡಗಳ ಮೇಲಿನಿಂದ ಪೆಟ್ರೋಲ್-ಸೀಮೆ ಎಣ್ಣೆ ಸುರಿಯತೊಡಗಿದ್ದರು. ಆಗ ಪ್ರತ್ಯಕ್ಷವಾದ ಬೆಂಕಿ ಕೊಳ್ಳಿ ಹಿಡಿದುಕೊಂಡ ಗುಂಪು ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದವರನ್ನೆಲ್ಲ ಬೆಂಕಿಗೆ ದೂಡಿತ್ತು. ಅವರೆಲ್ಲ ಮೊದಲೇ ಪ್ಲಾನ್ ಮಾಡಿದ್ದರು ಸಾಬ್...` ಎಂದು ಕುರೇಷಿಲಾಲ್ ಆ ಕರಾಳ ದಿನದ ಘಟನಾವಳಿಗಳನ್ನು ಗಲಭೆಯ ನಂತರ ವಿವರಿಸಿದ್ದರು.

ಎರಡನೆ ಕಾರಣ ಈಗ ಜೈಲು ಸೇರಿರುವ ಮಾಯಾಬೆನ್ ಕೊಡ್ನಾನಿಯ ಬೆಂಬಲ. ಸ್ಥಳೀಯ ಶಾಸಕರ ನಿಯಂತ್ರಣದಲ್ಲಿ ಪೊಲೀಸರು ಇರುವುದರಿಂದ ಅಪರಾಧಿಗಳಿಗೆ ರಕ್ಷಣೆ ನೀಡುವುದು ಮತ್ತು ಜನಬಲ-ಸಂಪನ್ಮೂಲ ಹೊಂದಿಸಿಕೊಳ್ಳುವುದು ಸುಲಭ. ಈ ಲೆಕ್ಕಾಚಾರ ಕೂಡಾ ಹುಸಿಯಾಗಲಿಲ್ಲ. ನರೋಡಾ ಪಾಟಿಯಾದ ಎದುರಿನ ರಸ್ತೆಯಲ್ಲಿಯೇ ರಾಜ್ಯ ಮೀಸಲು ಪಡೆಯ ಕೇಂದ್ರ ಕಚೇರಿ ಇದ್ದರೂ ಯಾವ ಪೊಲೀಸರೂ 2002ರ ಫೆಬ್ರವರಿ 28ರಂದು ಬೆಳಿಗ್ಗೆಯಿಂದ ಸಂಜೆ ವರೆಗೆ ರಕ್ಷಣೆಗೆ ಬಂದಿರಲಿಲ್ಲ. ರಕ್ಷಣೆ ಕೋರಿ ಓಡಿಬಂದ ಮಹಿಳೆಯರು ಮತ್ತು ಮಕ್ಕಳ ಮೇಲೆಯೇ ಪೊಲೀಸರು ಅಶ್ರುವಾಯು ಸಿಡಿಸಿದ್ದರು. ಖಾಕಿಧಾರಿ ಖಳನಾಯಕರಲ್ಲಿ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿರುವ ಸ್ಥಳೀಯ ಇನ್‌ಸ್ಪೆಕ್ಟರ್ ಎಂ.ಕೆ.ಮೈಸೂರ್‌ವಾಲಾ ಒಬ್ಬರು. ಇಷ್ಟೆ ಅಲ್ಲ, ನರೋಡಾಪಾಟಿಯಾದ ಅಗ್ನಿಕಾಂಡಕ್ಕೆ ಬಳಸಿದ್ದು ಎದುರಿನ ರಸ್ತೆಯಲ್ಲಿರುವ ರಾಜ್ಯ ರಸ್ತೆಸಾರಿಗೆಯ ದಾಸ್ತಾನು ಮಳಿಗೆಯಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್.

ಅಲ್ಲಿ ಬದುಕುಳಿದವರ ಬಾಯಿಯಿಂದಲೇ ಕೇಳದೆ ಇದ್ದರೆ ಎಲ್ಲರಂತೆ ತಾಯಿಯ ಹೊಟ್ಟೆಯಿಂದ ಬಂದ ಮನುಷ್ಯರು ಈ ರೀತಿ ವರ್ತಿಸಲು ಸಾಧ್ಯ ಎನ್ನುವುದನ್ನು ನಂಬುವುದು ಕಷ್ಟ. ಗುಜರಾತ್‌ನಲ್ಲಿ ಕೋಮುಗಲಭೆಯ ನಂತರ ಅಲ್ಲಿನ ನಿರಾಶ್ರಿತರು ಹೇಳಿದ್ದ ಕತೆಗಳನ್ನು ನಾನು ಕೂಡಾ ಆಗ ಸಂಪೂರ್ಣವಾಗಿ ನಂಬಿರಲಿಲ್ಲ. ಇಂತಹ ಘಟನೆಗಳು ನಡೆದಿದ್ದರೂ ಅದು ಕೋಮುದ್ವೇಷದಿಂದ ಕುರುಡರಾಗಿರುವ ಹುಚ್ಚರು ಮತ್ತು ಒಂದಷ್ಟು ಪುಂಡರು ಇದನ್ನು ನಡೆಸಿರಬಹುದೆಂದು ಬಹಳ ಮಂದಿಯಂತೆ ನಾನು ತಿಳಿದಿದ್ದೆ. ಆದರೆ ನಂತರದ ದಿನಗಳಲ್ಲಿ ಹೊರಬರತೊಡಗಿದ  ಸತ್ಯಸಂಗತಿಗಳು  ಬೆಚ್ಚಿಬೀಳಿಸುವಂತಹದ್ದು. 

28 ವರ್ಷಗಳ ಜೈಲುಶಿಕ್ಷೆಗೆ ಒಳಗಾಗಿರುವ ಮಾಯಾ ಕೊಡ್ನಾನಿ ಮಹಿಳೆ ಮತ್ತು ಸ್ಥಳೀಯ ಶಾಸಕಿ ಮಾತ್ರವಲ್ಲ, ಸ್ತ್ರೀರೋಗ ತಜ್ಞೆ ಕೂಡಾ. ದೇಶ ವಿಭಜನೆಯ ಕಾಲದಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ ಸಿಂಧಿ ಸಮುದಾಯಕ್ಕೆ  ಸೇರಿರುವ ಮಾಯಾ ಕೊಡ್ನಾನಿ ವಿದ್ಯಾರ್ಥಿದೆಸೆಯಿಂದಲೇ ಆರ್‌ಎಸ್‌ಎಸ್ ಜತೆ ಗುರುತಿಸಿಕೊಂಡವರು ಮತ್ತು ನರೇಂದ್ರ ಮೋದಿಯವರ ಜತೆಗಿದ್ದವರು.  ಈ ಪ್ರಕರಣದ ವಿಚಾರಣೆಯ ಪ್ರಾರಂಭದ ದಿನಗಳಲ್ಲಿ ಮಾಯಾ ಕೊಡ್ನಾನಿ ಹೆಸರು ಹೆಚ್ಚು ಕೇಳಿಬಂದಿರಲಿಲ್ಲ. ಆದರೆ ಈಕೆಯ ಬೆನ್ನುಹತ್ತಿದ ರಾಹುಲ್ ಶರ್ಮಾ ಎಂಬ ದಿಟ್ಟ ಪೊಲೀಸ್ ಅಧಿಕಾರಿ 2002ರ ಫೆಬ್ರವರಿ 28ರಂದು ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ನರೋಡಾಪಾಟಿಯಾದ ಆಸುಪಾಸಿನಲ್ಲಿಯೇ ಇದ್ದರೆನ್ನುವ ಮಾಹಿತಿಯನ್ನು ಮೊಬೈಲ್ ಸಿಗ್ನಲ್‌ಗಳ ದಾಖಲೆಗಳಿಂದ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಮಾಹಿತಿಯನ್ನು ರಾಜ್ಯಸರ್ಕಾರಕ್ಕೆ ನೀಡದೆ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರೆಂಬ ಕಾರಣಕ್ಕೆ ನರೇಂದ್ರಮೋದಿ ಸರ್ಕಾರ ಶರ್ಮಾ ಅವರನ್ನು ದುರ್ವರ್ತನೆಯ ಆರೋಪದಡಿ ಶಿಕ್ಷಿಸಲು ಪ್ರಯತ್ನಿಸಿತ್ತು. ಶರ್ಮಾ ಅವರ ಪ್ರಯತ್ನ ವಿಫಲವಾಗಲಿಲ್ಲ.

`ಗುಜರಾತ್ ಕೋಮುಗಲಭೆ ಗೋಧ್ರಾ ಹತ್ಯಾಕಾಂಡಕ್ಕೆ ಸಹಜವಾಗಿ ವ್ಯಕ್ತವಾದ ಪ್ರತಿಕ್ರಿಯೆ, ಇದರಲ್ಲಿ ಸರ್ಕಾರ ಇಲ್ಲವೇ ಪಕ್ಷದ ಪಾತ್ರ ಇಲ್ಲ` ಎಂದು ಕಳೆದ ಹತ್ತುವರ್ಷಗಳಲ್ಲಿ ಹೇಳುತ್ತಾ ಬಂದಿರುವ ಮುಖ್ಯಮಂತ್ರಿ ನರೇಂದ್ರಮೋದಿ ಅವರ ಸಮರ್ಥನೆಯನ್ನು ಕೂಡಾ ವಿಶೇಷ ನ್ಯಾಯಾಲಯ ಸುಳ್ಳೆಂದು ಸಾಬೀತುಮಾಡಿದೆ. 

ಗೋಧ್ರಾ ಹತ್ಯಾಕಾಂಡ ನಂತರ ಮುಸ್ಲಿಮರನ್ನೇ ಗುರಿಯಾಗಿಟ್ಟುಕೊಂಡು ನಡೆದ ಕೊಲೆ,ಸುಲಿಗೆ, ಅತ್ಯಾಚಾರಗಳೆಲ್ಲವೂ ಪೂರ್ವಯೋಜಿತ ಮತ್ತು ಅದರಲ್ಲಿ ತೊಡಗಿದ್ದ ಅಪರಾಧಿಗಳಿಗೆಲ್ಲ ಸರ್ಕಾರ ರಕ್ಷಣೆ ನೀಡುತ್ತ ಬಂದಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ನರೇಂದ್ರಮೋದಿ ನಿರಾಕರಿಸುವ ಸ್ಥಿತಿಯಲ್ಲಿ ಈಗ ಇಲ್ಲ. ಗಲಭೆಯ ಸಂದರ್ಭದಲ್ಲಿ ಕೇವಲ ಶಾಸಕಿಯಾಗಿದ್ದ ಮಾಯಾ ಕೊಡ್ನಾನಿಯನ್ನು  2007ರಲ್ಲಿ ಸಚಿವರನ್ನಾಗಿ ನೇಮಿಸಿದ್ದಾಗ ಗಲಭೆಯಲ್ಲಿ ಆಕೆಯ ಪಾತ್ರದ ಬಗ್ಗೆ ಮೋದಿ ಅವರಿಗೆ ತಿಳಿದಿರಲಿಲ್ಲ ಎಂದು ಹೇಳಿದರೂ ಯಾರೂ ನಂಬಲಾರರು.

ನರೋಡಾ ಪಾಟಿಯಾ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಇನ್ನೂ ಒಂದು ಕಾರಣಕ್ಕಾಗಿ ಮಹತ್ವಪೂರ್ಣವಾದುದು. ಸಾಮಾನ್ಯವಾಗಿ ಕೋಮುಗಲಭೆಗಳ ಪ್ರಕರಣದಲ್ಲಿ ಗೂಂಡಾಗಳು, ನಿರುದ್ಯೋಗಿಗಳು, ಬಡವರು, ನಿರ್ಗತಿಕರು, ಹಿಂದುಳಿದವರು, ದಲಿತರೇ ಅಪರಾಧಿಗಳೆನಿಸಿಕೊಂಡು ಶಿಕ್ಷೆ ಅನುಭವಿಸುತ್ತಾರೆ. ಹಿಂದೂ ಧರ್ಮದ ರಕ್ಷಣೆಗಾಗಿ ನಡೆದ ಉತ್ತರಪ್ರದೇಶದ ಬಾಬ್ರಿಮಸೀದಿ ಧ್ವಂಸದ ಕಾರ್ಯಾಚರಣೆಯಿಂದ ಹಿಡಿದು ಮಂಗಳೂರಿನ ಹೋಂಸ್ಟೇ ಮೇಲಿನ ದಾಳಿವರೆಗಿನ ಎಲ್ಲ ಪ್ರಕರಣಗಳಲ್ಲಿಯೂ ಇದು ಸತ್ಯ. ಇದನ್ನು ಯಾರಿಗಾದರೂ ಪರಾಮರ್ಶಿಸಿಕೊಳ್ಳಬೇಕೆಂದು ಅನಿಸಿದರೆ ಸ್ವಾತಂತ್ರ್ಯಾನಂತರ ದೇಶದಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದ  ಪ್ರಥಮ ಮಾಹಿತಿ ವರದಿ ಮತ್ತು ಆರೋಪಪಟ್ಟಿಗಳಲ್ಲಿ ಇರುವ ಹೆಸರುಗಳನ್ನು ಪರಿಶೀಲಿಸಬಹುದು. 

ಆರೋಪಿಗಳಾದವರಲ್ಲಿ ಶೇಕಡಾ 99ರಷ್ಟು ಮಂದಿ ಬರೀ `ಪಾತ್ರಧಾರಿಗಳು`. `ಸೂತ್ರಧಾರಿಗಳು` ತಮ್ಮ ಸುತ್ತ  ಭದ್ರತೆಗಾಗಿ ಪೊಲೀಸರನ್ನು ಇಟ್ಟುಕೊಂಡು ಸುರಕ್ಷಿತವಾಗಿರುತ್ತಾರೆ. `ಪಾತ್ರಧಾರಿಗಳು` ಜೈಲು ಸೇರುತ್ತಾರೆ, ಅವರ ಕುಟುಂಬಗಳು ಬೀದಿಗೆ ಬೀಳುತ್ತವೆ. ಇದು ಹಿಂದೂ ಮತ್ತು ಮುಸ್ಲಿಂ ಧರ್ಮಗಳೆರಡಕ್ಕೂ ಸೇರಿರುವ ಸತ್ಯ.ಆದರೆ ಇದೇ ಮೊದಲ ಬಾರಿಗೆ `ಸೂತ್ರದಾರರು` ಕೂಡಾ ಶಿಕ್ಷೆಗೊಳಗಾಗಿದ್ದಾರೆ. ಹಾಲಿ ಶಾಸಕಿ ಮಾಯಾ ಕೊಡ್ನಾನಿಗೆ ನ್ಯಾಯಾಲಯ ವಿಧಿಸಿರುವ  28 ವರ್ಷಗಳ ಸೆರೆವಾಸದ ಶಿಕ್ಷೆ `ಕಂಡವರ ಮಕ್ಕಳನ್ನು ಬಾಯಿಗೆ ತಳ್ಳುವ` ದುಷ್ಟ ಮನಸ್ಸುಗಳಿಗೆಲ್ಲ ಎಚ್ಚರಿಕೆಯ ಗಂಟೆಯಂತಿದೆ.

ಬಾಬ್ರಿ ಮಸೀದಿ ಧ್ವಂಸದ ನಂತರ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ಕೋಮುದ್ವೇಷದ ಜ್ವಾಲೆ ನಿಯಂತ್ರಣಕ್ಕೆ ಬರಬಹುದೇನೋ ಎಂಬ ಸಣ್ಣ ಆಸೆಯ ಬೆಳಕು ಕೂಡಾ ಗುಜರಾತ್‌ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿದೆ. ಹಿಂದೂ ಕೋಮುವಾದಕ್ಕೆ ವಿರುದ್ಧವಾಗಿ ಅಷ್ಟೇ ಅಪಾಯಕಾರಿಯಾಗಿ ಮುಸ್ಲಿಂ ಕೋಮುವಾದ ಇತ್ತೀಚೆಗೆ ಬೆಳೆಯುತ್ತಿದೆ. ಮುಸ್ಲಿಂ ಕೋಮುವಾದವನ್ನು ಬೆಳೆಸುವವರು ಕೂಡಾ ಇಲ್ಲಿಯ ವರೆಗೆ ಬಳಸುತ್ತಾ ಬಂದಿರುವುದು ಗುಜರಾತ್ ಮತ್ತಿತರ ಕಡೆಗಳಲ್ಲಿ ನಡೆದಿರುವ ಕೋಮುಗಲಭೆಗಳ ಅತಿರಂಜಿತ ವರದಿಗಳನ್ನು. ಇವರು ಮುಸ್ಲಿಂ ಯುವಕರ ತಲೆಕೆಡಿಸುವುದೇ `ಗುಜರಾತ್‌ನಲ್ಲಿ ಸರ್ಕಾರವೇ ಮುಂದೆ ನಿಂತು ಸಾವಿರಾರು ಮುಸ್ಲಿಮರ ಮಾರಣ ಹೋಮ ನಡೆಸಿದರೂ ನೊಂದವರಿಗೆ ಇಲ್ಲಿಯ ವರೆಗೆ ನ್ಯಾಯ ಸಿಕ್ಕಿಲ್ಲ. ನ್ಯಾಯಾಲಯಗಳಿಂದಲೂ ರಕ್ಷಣೆ ಸಿಗದೆ ಇದ್ದರೆ ಈ ದೇಶದ ಮೇಲೆ ಹೇಗೆ ಭರವಸೆ ಇಟ್ಟುಕೊಳ್ಳಲು ಸಾಧ್ಯ?` ಎನ್ನುವ ಪ್ರಶ್ನೆಯೊಂದಿಗೆ. ಇಂತಹದ್ದೇ ಪ್ರಶ್ನೆಯನ್ನು ನರೋಡಾ ಪಾಟಿಯಾದ ಇಸ್ಲಾಮಿಕ್ ಪರಿಹಾರ ಸಮಿತಿಯ ಕಾರ್ಯದರ್ಶಿ ನಜೀರ್‌ಖಾನ್ ಪಠಾಣ್ ಐದು ವರ್ಷಗಳ ಹಿಂದೆ ನನಗೂ ಕೇಳಿದ್ದರು. ಆಗ ನನ್ನಲ್ಲಿಯೂ ಉತ್ತರ ಇರಲಿಲ್ಲ, ಈಗ  ಕೈಯಲ್ಲಿರುವ ಗುಜರಾತ್ ವಿಶೇಷ ನ್ಯಾಯಾಲಯದ ತೀರ್ಪನ್ನು ತೋರಿಸಿ ಉತ್ತರಿಸ ಬಲ್ಲೆ.

 `ಇತ್ತೀಚೆಗೆ ಮದರಸಾಕ್ಕೆ ಬರುತ್ತಿರುವ ಹುಡುಗರೆಲ್ಲ ಮಾತೆತ್ತಿದರೆ ಸದ್ದಾಂಹುಸೇನ್, ಒಸಾಮ ಬಿನ್ ಲಾಡೆನ್ ಎನ್ನುತ್ತಿದ್ದಾರೆ..` ಎಂದು ವಿಷಾದದಿಂದ ಅದೇ ಪಠಾಣ್ ಹೇಳಿದ್ದರು. ಆ ಹುಡುಗರೆಲ್ಲ ಮಾತನಾಡಿಕೊಳ್ಳಲು ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೊತ್ನಾ ಯಾಗ್ನಿಕ್‌ನಿಂದ ಹಿಡಿದು ನಿವೃತ್ತ ನ್ಯಾಯಮೂರ್ತಿಗಳಾದ ಜೆ.ಎಸ್.ವರ್ಮಾ, ಅರಿಜಿತ್ ಪಸಾಯತ್ ಮತ್ತು ಹೊಸಬೆಟ್ಟು ಸುರೇಶ್, ಪೊಲೀಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್, ರಾಹುಲ್ ಶರ್ಮಾ ಮತ್ತು ಸಂಜೀವ್ ಭಟ್, ವಕೀಲರಾದ ಮುಕುಲ್ ಸಿನ್ಹಾ ಮತ್ತು ಗೋವಿಂದ್ ಪರಮಾರ್, ಸಾಮಾಜಿಕ ಕಾರ್ಯಕರ್ತರಾದ ತೀಸ್ತಾ ಸೆಟಲ್‌ವಾದ್, ಕಲಾವಿದೆ ಮಲ್ಲಿಕಾ ಸಾರಾಭಾಯ್, ಇಳಿವಯಸ್ಸಿನಲ್ಲಿಯೂ ಹಿಂದೂ-ಮುಸ್ಲಿಂ ಸೌಹಾರ್ದತೆಗಾಗಿ ಶ್ರಮಿಸುತ್ತಿರುವ  ಪ್ರೊ.ಬಂದೂಕ್‌ವಾಲಾ ಸೇರಿದಂತೆ ಎಷ್ಟೊಂದು ಹೆಸರುಗಳಿವೆಯಲ್ಲಾ ಎಂದು ಅವರಿಗೆ ಹೇಳಬೇಕೆಂದಿದ್ದೇನೆ.

ಊಹಾಪೋಹ ಮಹಾಪೂರದಲ್ಲಿ ಕೊಚ್ಚಿಹೋಗುವ ಮುನ್ನ... September 03, 2012


ಕಳೆದ ನಾಲ್ಕಾರು ದಿನಗಳಲ್ಲಿ ಮಾಧ್ಯಮಗಳ ಮೂಲಕ ಸೋರಿಬರುತ್ತಿರುವ ಸುದ್ದಿಗಳೆಲ್ಲವೂ ನಿಜವಾಗಿದ್ದರೆ ದೇಶದ ಭವಿಷ್ಯ ಭಯಾನಕವಾಗಿದೆ. ರಾಜ್ಯದ ಕೆಲವು ರಾಜಕಾರಣಿಗಳು ಮತ್ತು ಪತ್ರಕರ್ತರ ಹತ್ಯೆಗೆ ಸಂಚು ರೂಪಿಸಿರುವ ಆರೋಪದ ಮೇಲೆ ಹನ್ನೊಂದು ಮುಸ್ಲಿಮ್ ಯುವಕರನ್ನು ಬಂಧಿಸಿದ ನಂತರದ `ಸುದ್ದಿ ಸ್ಫೋಟ`ವನ್ನು ನಂಬಿದ ಯಾರಲ್ಲಿಯೂ ಹೊರಗೆ ಹೊರಟ ಮೇಲೆ ಸುರಕ್ಷಿತವಾಗಿ ಮನೆಗೆ ಮರಳುತ್ತೇನೆ ಎಂಬ ವಿಶ್ವಾಸ ಹುಟ್ಟಲಾರದು.

`...ರಾಜ್ಯದ ಮೆಟ್ರೊ ರೈಲ್ವೆ ನಿಲ್ದಾಣದಿಂದ ಹಿಡಿದು ಕೈಗಾ ಅಣುಸ್ಥಾವರದವರೆಗೆ, ಗಣೇಶೋತ್ಸವದಿಂದ ಹಿಡಿದು ಮೈಸೂರು ದಸರಾದ ವರೆಗೆ ಹಲವಾರು ಕಡೆ ಬಾಂಬು ಸ್ಫೋಟ ನಡೆಸುವ ಉದ್ದೇಶವನ್ನು ಈ ಶಂಕಿತ ಉಗ್ರರು ಹೊಂದಿದ್ದರು. ಎಲ್‌ಇಟಿ, ಹುಜಿ ಸೇರಿದಂತೆ ಹಲವು ಪ್ರಮುಖ ಉಗ್ರಗಾಮಿ ಸಂಘಟನೆಗಳ ಜತೆ ಇವರು ಸಂಪರ್ಕ ಹೊಂದಿದ್ದರು. ಉತ್ತರಪ್ರದೇಶ, ಮಹಾರಾಷ್ಟ್ರ, ಹೈದರಾಬಾದ್‌ಗಳಲ್ಲಿಯೂ ಇವರ ಜಾಲ ಹರಡಿದೆ, ಪಾಕಿಸ್ತಾನ ಮಾತ್ರವಲ್ಲ ಆಫ್ಘಾನಿಸ್ತಾನ ಮತ್ತು ಸೌದಿ ಅರೆಬಿಯಾ ದೇಶಗಳಿಗೂ ಇವರು ಭೇಟಿ ನೀಡಿದ್ದರು......` ಇತ್ಯಾದಿ ಊಹಾಪೋಹ ಆಧರಿತ ಸುದ್ದಿಗಳ ಮಹಾಪೂರವೇ ಹರಿದುಬರುತ್ತಿದೆ.

 ಇವುಗಳಲ್ಲಿ ಯಾವುದೂ ಪೊಲೀಸರ ಅಧಿಕೃತ ಹೇಳಿಕೆಗಳಲ್ಲ, ಸಾರ್ವಜನಿಕ ದಾಖಲೆಯಾಗಿರುವ ಪ್ರಥಮ ಮಾಹಿತಿ ವರದಿಯನ್ನೂ ಪೊಲೀಸರು ಹೊರಗೆ ಬಿಟ್ಟುಕೊಡುತ್ತಿಲ್ಲ.

ಹೀಗೆ ಹೇಳಿದ ಮಾತ್ರಕ್ಕೆ ಅವರು ಕಟ್ಟುನಿಟ್ಟಾಗಿ ತನಿಖೆಯ ರಹಸ್ಯಪಾಲನೆ ಮಾಡುತ್ತಿದ್ದಾರೆ ಎಂದು ಅರ್ಥವಲ್ಲ, ಪರಿಚಿತ ಪತ್ರಕರ್ತರಿಗೆ ಪೊಲೀಸ್ ಅಧಿಕಾರಿಗಳು ಮುಕ್ತವಾಗಿ `ತನಿಖೆಯ ವಿವರ`ಗಳನ್ನು ಸೋರಿಬಿಡುತ್ತಿದ್ದಾರೆ. ಒಬ್ಬರು ಹೇಳಿರುವುದನ್ನು ಇನ್ನೊಬ್ಬರು ನಿರಾಕರಿಸುತ್ತಿದ್ದಾರೆ. ಕೈಗಾ ಅಣುಸ್ಥಾವರ ಶಂಕಿತ ಉಗ್ರರ ಗುರಿಯಾಗಿತ್ತು ಎಂದು ಸುದ್ದಿಸಂಸ್ಥೆಯೊಂದು ಮಾಡಿರುವ ವರದಿಯನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರೇ ನಿರಾಕರಿಸುತ್ತಿದ್ದಾರೆ.

ಮೆಟ್ರೊ ನಿಲ್ದಾಣ ಸ್ಫೋಟ ಪ್ರಯತ್ನದ ಸುದ್ದಿಯನ್ನು ಕೂಡಾ ನಿರಾಕರಿಸಲಾಗಿದೆ. ಹಳೆಯ ಸುದ್ದಿಗಳನ್ನು ನಿರಾಕರಿಸಲಾಗುತ್ತಿದ್ದಂತೆಯೇ ಹೊಸ ಸುದ್ದಿಗಳು ಬೆಳಕಿಗೆ ಬರುತ್ತಿವೆ. ಪೈಪೋಟಿಯ ಯುಗದಲ್ಲಿ ಸಿಕ್ಕ ಸುದ್ದಿಯನ್ನು ದೃಢೀಕರಿಸಲು ಬೇಕಾದ ಸಮಯಾವಕಾಶ ಪತ್ರಕರ್ತರಿಗೂ ಇಲ್ಲ. ಮಾಧ್ಯಮರಂಗದ ಈ ದೌರ್ಬಲ್ಯವನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೋ ಏನೋ ಎಂದು ಅನುಮಾನ ಪಡುವ ರೀತಿಯಲ್ಲಿ `ಸುದ್ದಿಸ್ಫೋಟ` ನಡೆಯುತ್ತಿದೆ.

ಇವೆಲ್ಲವನ್ನೂ ನೋಡುತ್ತಿದ್ದಾಗ `ಕಾಶ್ಮೆರ್ ಟೈಮ್ಸ` ಪತ್ರಿಕೆಯ ದೆಹಲಿ ಬ್ಯೂರೊ ಮುಖ್ಯಸ್ಥರಾದ ಇಫ್ತಿಕರ್ ಗಿಲಾನಿ ಎಂಬ ಪತ್ರಕರ್ತ ನೆನಪಾಗುತ್ತಿದ್ದಾರೆ. ದೆಹಲಿಯಲ್ಲಿ ನಮ್ಮ ಪತ್ರಿಕೆಯ ಕಚೇರಿ ಇರುವ ಐಎನ್‌ಎಸ್ ಕಟ್ಟಡದಲ್ಲಿಯೇ ಗಿಲಾನಿ ಅವರ ಪತ್ರಿಕೆಯ ಕಚೇರಿಯೂ ಇದೆ. ಸ್ವಲ್ಪ ಕುಳ್ಳಗಿನ, ಸೌಮ್ಯ ಸ್ವಭಾವದ ಸುಮಾರು 35ರ ಆಜುಬಾಜಿನ ಈ ಗಿಲಾನಿ `ಪಾಕಿಸ್ತಾನದ ಜತೆ ಸಂಪರ್ಕ ಹೊಂದಿದ್ದ ಭಯೋತ್ಪಾದಕ`ನೆಂದು ಒಂದು ದಿನ ಇದ್ದಕ್ಕಿದ್ದಂತೆ ಟಿವಿಚಾನೆಲ್‌ಗಳು ಕಿರಿಚಾಡುತ್ತಿರುವಾಗ ಅವರನ್ನು ಮೂರು ವರ್ಷಗಳಿಂದ ಆಗಾಗ ನೋಡುತ್ತಿದ್ದ ನನಗೆ ಆಘಾತವಾಗಿತ್ತು.

ಇಫ್ತಿಕರ್ ಗಿಲಾನಿ ಅವರು ಕಾಶ್ಮೆರದ ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಅಲಿ ಶಹಾ ಗಿಲಾನಿ ಅಳಿಯನೆಂದು ಹೆಚ್ಚಿನವರಿಗೆ ಗೊತ್ತಾಗಿದ್ದು ಕೂಡಾ ಅವರ ಬಂಧನದ ನಂತರ. 2002ರ ಜುಲೈ ಒಂಬತ್ತರಂದು ದೆಹಲಿಯ ಮಾಳವೀಯ ನಗರದ ಅವರ ಮನೆ ಮೇಲೆ ದಾಳಿ ನಡೆಸಿದ ವರಮಾನ ಇಲಾಖೆ ಅಧಿಕಾರಿಗಳ ಜತೆಯಲ್ಲಿ ಬಂದ ಐಬಿ ಅಧಿಕಾರಿಗಳು ಗಿಲಾನಿ ಅವರನ್ನು ಉಟ್ಟ ಬಟ್ಟೆಯಲ್ಲಿಯೇ ಬಂಧಿಸಿ ಕರೆದೊಯ್ದಿದ್ದರು.

`ಅಧಿಕೃತ ರಹಸ್ಯ ಕಾಯಿದೆ`ಯಡಿ ಬಂಧಿಸಲಾದ ಅವರ ಮೇಲೆ ಬೇಹುಗಾರಿಕೆ, ರಾಜದ್ರೋಹದ ಆರೋಪಗಳನ್ನು ಮಾತ್ರವಲ್ಲ ಅಬ್ದುಲ್ ಗನಿ ಲೋನ್ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಆರೋಪಗಳನ್ನೂ ಹೊರಿಸಲಾಗಿತ್ತು. ಅವರನ್ನು ಬಂಧಿಸಿದ ಎರಡು ತಿಂಗಳ ನಂತರ `ಅಶ್ಲೀಲ ಚಿತ್ರಗಳ ಪ್ರದರ್ಶನ ಮತ್ತು ಮಾರಾಟ ನಡೆಸುತ್ತಿದ್ದರು` ಎಂಬ ಹೊಸ ಆರೋಪ ಮಾಡಲಾಗಿತ್ತು.

 ಈ ಎಲ್ಲ ಆರೋಪಗಳಿಗೆ ಗುಪ್ತಚರ ಇಲಾಖೆ ಆಧಾರವಾಗಿ ಬಳಸಿದ್ದು ಅವರ ಕಂಪ್ಯೂಟರ್‌ನಿಂದ ವಶಪಡಿಸಿಕೊಂಡ `ಫ್ಯಾಕ್ಟ್‌ಶೀಟ್ ಆನ್ ಇಂಡಿಯನ್ ಫೋರ್ಸಸ್ ಇನ್ ಇಂಡಿಯಾ ಹೆಲ್ಡ್ ಕಾಶ್ಮೆರ್` ಎಂಬ ಹೆಸರಿನ ಫೈಲ್‌ನಲ್ಲಿದ್ದ ಐದು ಪುಟಗಳ ದಾಖಲೆ. ಕಾಶ್ಮೆರದ ಉತ್ತರ ಕಮಾಂಡ್‌ನ ವ್ಯಾಪ್ತಿಯಲ್ಲಿರುವ ಭಾರತೀಯ ಸೇನೆ ಮತ್ತು ಅರೆಸೇನಾಪಡೆಯ ಸಾಮರ್ಥ್ಯದ ಬಗ್ಗೆ ಅದರಲ್ಲಿ ವಿವರಗಳಿದ್ದವು.

ಈ ಬಗ್ಗೆ ಸೇನಾ ಗುಪ್ತಚರ ಮಹಾನಿರ್ದೇಶಕರ (ಡಿಜಿಎಂಐ) ಅಭಿಪ್ರಾಯ ಪಡೆಯಲಾಗಿತ್ತು. ` ..ಈ ಮಾಹಿತಿ ದೇಶದ ಭದ್ರತೆಗೆ ಅಪಾಯಕಾರಿ ಹಾಗೂ ಜಮ್ಮು ಮತ್ತು ಕಾಶ್ಮೆರದಲ್ಲಿನ ಕಾರ್ಯಾಚರಣೆಯ ಮೇಲೆ ಗಂಭೀರ ಪರಿಣಾಮ ಉಂಟುಮಾಡಲಿದೆ..`ಎಂದು ಡಿಜಿಎಂಐ ಹೇಳಿತ್ತು. ಇಂಟಲಿಜೆನ್ಸ್ ಬ್ಯೂರೋ (ಐಬಿ) ಆಗಲೇ ಗಿಲಾನಿ ಅಪರಾಧಿ ಎಂದು ತೀರ್ಮಾನಿಸಿಯಾಗಿತ್ತು.

ಏಳು ತಿಂಗಳ ನಂತರ ಆರೋಪಮುಕ್ತರಾಗಿ ಹೊರಬಂದ ಗಿಲಾನಿ ತಿಹಾರ್ ಜೈಲಿನೊಳಗೆ ಪ್ರವೇಶಿಸಿದ ಮೊದಲ ದಿನದ ಅನುಭವವನ್ನು  `ಮೈ ಡೇಸ್ ಇನ್ ಪ್ರಿಸನ್` ಎಂಬ ತಮ್ಮ ಪುಸ್ತಕದಲ್ಲಿ ಹೀಗೆ ಬರೆದುಕೊಂಡಿದ್ದಾರೆ:

`.....ತಿಹಾರ್ ಜೈಲು ಪ್ರವೇಶಿಸುತ್ತಿದ್ದಂತೆಯೇ ಅಲ್ಲಿದ್ದ ಒಬ್ಬ ಅಧಿಕಾರಿ ತನ್ನನ್ನು ಹಿಂಬಾಲಿಸುವಂತೆ ನನಗೆ ಸೂಚನೆ ನೀಡಿದರು. ಅಲ್ಲಿರುವ ಮೇಜಿನ ಹಿಂದೆ ಕಿಶನ್ ಎನ್ನುವ ಅಧಿಕಾರಿ ಕೂತಿದ್ದರು,ಅವರ ಸುತ್ತ 10-12 ಮಂದಿ ನೆರೆದಿದ್ದರು. ಅವರಲ್ಲಿ ಕೆಲವರು ಜೈಲು ಸಿಬ್ಬಂದಿ, ಉಳಿದವರು ಕೈದಿಗಳು.

ನನ್ನ ಹೆಸರೇನೆಂದು ಕಿಶನ್ ಕೇಳಿದರು. ನಾನು ಉತ್ತರಿಸುವಷ್ಟರಲ್ಲಿ ಅಲ್ಲಿದ್ದ ಜೈಲು ಸಿಬ್ಬಂದಿಯೊಬ್ಬ ನನ್ನ ಕೆನ್ನೆಗೆ ಬೀಸಿ ಹೊಡೆದ. ತಕ್ಷಣ ಅಲ್ಲಿದ್ದವರೆಲ್ಲರೂ ನನ್ನ ಮೇಲೆ ಎರಗಿದರು, ಹೊಟ್ಟೆ,ಬೆನ್ನು, ತಲೆ ಸೇರಿದಂತೆ ಸಿಕ್ಕಸಿಕ್ಕಲ್ಲಿ ಹೊಡೆದದ್ದು ಮಾತ್ರವಲ್ಲ ನನ್ನ ಕೂದಲನ್ನು ಹಿಡಿದು ಜಗ್ಗಿ ತಲೆಯನ್ನು ಮೇಜಿಗೆ ಅಪ್ಪಳಿಸಿದರು. ನನ್ನ ಬಾಯಿ,ಕಿವಿ, ಮೂಗುಗಳಿಂದ ರಕ್ತ ಸುರಿಯುತ್ತಿತ್ತು.

`ಸಾಲಾ, ಗದ್ದಾರ್, ಪಾಕಿಸ್ತಾನಿ ಏಜಂಟ್, ನಿನ್ನಂತಹವರು ಬದುಕಬಾರದು, ನೇರವಾಗಿ ಗಲ್ಲಿಗೇರಿಸಬೇಕು..` ಎಂದು ಬೈಯ್ಯುತ್ತಿರುವುದು ಪ್ರಜ್ಞೆ ತಪ್ಪುವವರೆಗೆ ಕೇಳುತ್ತಲೇ ಇತ್ತು. ಪ್ರಜ್ಞೆ ಬಂದ ಮೇಲೆ ನನ್ನ ಅಂಗಿಯಿಂದ ಟಾಯ್ಲೆಟ್ ಶುಚಿ ಮಾಡುವಂತೆ ತಿಳಿಸಿ ಮೂರು ದಿನಗಳ ಕಾಲ ಅದೇ ಅಂಗಿಯನ್ನು ತೊಡುವಂತೆ ಮಾಡಿದರು......`

ಯಾವ ಉದ್ದೇಶದಿಂದ ಗಿಲಾನಿ ಅವರನ್ನು ಬಂಧಿಸಿದ್ದರೆಂಬುದು ಈಗಲೂ ನಿಗೂಢವಾಗಿಯೇ ಉಳಿದಿದೆ. ಬಂಧಿಸಿದ ಮರುಕ್ಷಣವೇ ಐಬಿ ಅಧಿಕಾರಿಗಳಿಗೆ ತಮ್ಮ ತಪ್ಪಿನ ಅರಿವಾಗಿರಬಹುದು.

ಮಾಡಿರುವ ಆರೋಪವನ್ನು ಸಮರ್ಥಿಸಿಕೊಳ್ಳುವ ಸಾಕ್ಷ್ಯಾಧಾರಗಳು ಅವರಲ್ಲಿ ಇರಲಿಲ್ಲ. ಆಗ ಗೃಹಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ಹದಿನೇಳು ಬಾರಿ ಗಿಲಾನಿ ಸಂಬಂಧಿತ ಕಡತವನ್ನು ತರಿಸಿಕೊಂಡು ಪರಿಶೀಲಿಸಿದ್ದಾರೆ. ಪ್ರತಿಬಾರಿ ಸೂಕ್ತ ಸಾಕ್ಷ್ಯಾಧಾರಗಳನ್ನು ಕೇಳಿದ್ದರು. ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುವ ಬದಲಿಗೆ ಐಬಿ ಅಧಿಕಾರಿಗಳು ಒಂದಷ್ಟು ಸುಳ್ಳುಕತೆಗಳನ್ನು ಕಟ್ಟಿ ಮಾಧ್ಯಮಗಳಲ್ಲಿ ತೇಲಿ ಬಿಡತೊಡಗಿದ್ದರು.

ಮಾಧ್ಯಮಗಳು ಕೂಡಾ `ನಂಬಲರ್ಹ ಮೂಲಗಳು` ಕೊಟ್ಟ ಮಾಹಿತಿಯನ್ನು ಪರಾಮರ್ಶಿಸಲು ಹೋಗದೆ ಪ್ರಕಟಣೆ-ಪ್ರಸಾರ ನಡೆಸಿದವು. `ಹಿಂದಿ ಟಿವಿ ಚಾನೆಲ್‌ನ ಒಬ್ಬ ವರದಿಗಾರ ತಮ್ಮ ಮನೆಯ ಮುಂಭಾಗದಲ್ಲಿ ತನ್ನ ಹೆಸರಿದ್ದ ಅಂಚೆಪೆಟ್ಟಿಗೆಯ ಮುಂದೆ ನಿಂತು `ಗಿಲಾನಿ ಪರಾರಿಯಾಗಿದ್ದಾರೆ` ಎಂದು ಹೇಳುತ್ತಿರುವಾಗ ಮನೆಯೊಳಗೆ ಐಬಿ ಅಧಿಕಾರಿಗಳು ತಮ್ಮನ್ನು ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದುದನ್ನು ಗಿಲಾನಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ದೆಹಲಿಯ ಪ್ರಸಿದ್ಧ ಇಂಗ್ಲಿಷ್ ಪತ್ರಿಕೆಯ ಪತ್ರಕರ್ತೆಯೊಬ್ಬರು `ನಾನು ಐಎಸ್‌ಐ ಏಜಂಟ್ ಎಂದು ಗಿಲಾನಿ ತಪ್ಪೊಪ್ಪಿಕೊಂಡಿದ್ದಾರೆ` ಎಂದು ಐಬಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದರು. ಇದರಿಂದ ನೊಂದ ಗಿಲಾನಿ ಪತ್ನಿ ಅನಿಸಾ ಅವರು ಆ ಪತ್ರಿಕೆಯ ಮಾಲೀಕರನ್ನು ಸಂಪರ್ಕಿಸಿ ಆಗಿರುವ ಅನಾಹುತವನ್ನು ತಿಳಿಸಿದ್ದರು. ಮರುದಿನ ಪತ್ರಿಕೆ ಕ್ಷಮಾಪಣೆ ಕೇಳಿತ್ತು.

ನಿಜಾಂಶ ಏನೆಂದರೆ ಗಿಲಾನಿ ಅವರ ಮೇಲೆ `ಅಧಿಕೃತ ರಹಸ್ಯ ಕಾಯ್ದೆ`ಯ ಉಲ್ಲಂಘನೆಯ ಆರೋಪಕ್ಕೆ ಕಾರಣವಾದ ಅವರದ್ದೇ ಕಂಪ್ಯೂಟರ್‌ನಿಂದ ವಶಪಡಿಸಿಕೊಂಡ ದಾಖಲೆ ಭಾರತ ಸರ್ಕಾರದ್ದಾಗಿರದೆ, ಪಾಕಿಸ್ತಾನದ್ದಾಗಿತ್ತು. ಡಾ.ನಾಸಿರ್ ಕಮಾಲ್ ಎಂಬ ಪಾಕಿಸ್ತಾನಿ ರಕ್ಷಣಾ ತಜ್ಞರು ಬರೆದ ಈ ಲೇಖನವನ್ನು ಇಸ್ಲಾಮಾಬಾದ್‌ನ ರಕ್ಷಣಾ ಅಧ್ಯಯನ ಸಂಸ್ಥೆ ಪ್ರಕಟಿಸಿತ್ತು. ಅದನ್ನು ಗಿಲಾನಿ ತಮ್ಮ ಕಂಪ್ಯೂಟರ್‌ನಲ್ಲಿ ಡೌನ್‌ಲೋಡ್ ಮಾಡಿ ಇಟ್ಟುಕೊಂಡಿದ್ದರು.

ಇದು ಆಗಲೇ ರಕ್ಷಣಾ ಖಾತೆಯ ಗ್ರಂಥಾಲಯಗಳಲ್ಲಿ ಲಭ್ಯ ಇತ್ತು. ಪಾಕಿಸ್ತಾನಿಗಳು ಜಮ್ಮು ಮತ್ತು ಕಾಶ್ಮೆರವನ್ನು ಹಾಗೆಂದು ಕರೆಯದೆ `ಇಂಡಿಯನ್ ಹೆಲ್ಡ್ ಕಾಶ್ಮೆರ್` ಎಂದೇ ಈಗಲೂ ಕರೆಯುವುದು. (ಅವರು `ಆಜಾದಿ ಕಾಶ್ಮೆರ` ಎಂದು ಹೇಳುತ್ತಿರುವ ಪ್ರದೇಶವನ್ನು ನಾವು `ಪಾಕಿಸ್ತಾನ ಆಕ್ರಮಿತ ಕಾಶ್ಮೆರ` ಎಂದು ಕರೆಯುತ್ತೇವೆಯಲ್ಲ ಹಾಗೆ). ಇದರ ಅರಿವಿದ್ದ ಐಬಿ ತಾನು ವಶಪಡಿಸಿಕೊಂಡ ದಾಖಲೆಯಲ್ಲಿ `ಇಂಡಿಯನ್‌ಹೆಲ್ಡ್ ಕಾಶ್ಮೆರ` ಎಂದು ಇದ್ದ ಕಡೆಗಳೆಲ್ಲ `ಜಮ್ಮು ಮತ್ತು ಕಾಶ್ಮೆರ` ಎಂದು ತಿದ್ದಿತ್ತು.

ಆಗಲೇ ಡಿಜಿಎಂಐಗೆ ತಪ್ಪಿನ ಅರಿವಾಗಿ ತಾನು ಮೊದಲು ನೀಡಿದ್ದ ಅಭಿಪ್ರಾಯವನ್ನು ವಾಪಸು ಪಡೆದು `ಪ್ರಾರಂಭದಲ್ಲಿ ನಾವು ನೀಡಿದ್ದ ಅಭಿಪ್ರಾಯ ಅತಿರಂಜಿತವಾಗಿತ್ತು. ಈ ದಾಖಲೆ ಎಲ್ಲ ಕಡೆ ಸುಲಭದಲ್ಲಿ ಲಭ್ಯ ಇರುವುದರಿಂದ ಅದಕ್ಕೆ ಭದ್ರತಾ ಮೌಲ್ಯ ಇಲ್ಲ` ಎಂಬ ಪರಿಷ್ಕೃತ ಅಭಿಪ್ರಾಯ ನೀಡಿತ್ತು.

ಅಷ್ಟು ಹೊತ್ತಿಗೆ ಪ್ರಾರಂಭದಿಂದಲೂ ಈ ಪ್ರಕರಣದಲ್ಲಿ ಗಿಲಾನಿ ಬಗ್ಗೆ ಅನುಕಂಪ ಹೊಂದಿದ್ದ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಪ್ರಧಾನಿ ಅಟಲಬಿಹಾರಿ ವಾಜಪೇಯಿಯವರಿಗೆ ಕೂಡಾ ಐಬಿ ಎಡವಿರುವುದನ್ನು ಮನವರಿಕೆ ಮಾಡಿಕೊಟ್ಟಿದ್ದರು.

ಕೊನೆಗೆ ಏಳು ತಿಂಗಳ ನಂತರ ಇಫ್ತಿಕರ್ ಗಿಲಾನಿ ಅವರನ್ನು 2003 ಜೂನ್ 13ರಂದು ಬಿಡುಗಡೆ ಮಾಡಲಾಯಿತು. ಆದರೆ ಯಾರದೋ ಒತ್ತಡಕ್ಕೆ ಸಿಕ್ಕಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದ ಅಧಿಕಾರಿಗಳ ಬಗ್ಗೆ ಯಾವ ವಿಚಾರಣೆಯೂ ನಡೆಯಲಿಲ್ಲ.

ಭಯೋತ್ಪಾದಕರು ಮತ್ತು ನಕ್ಸಲೀಯರ ಜತೆ ಸಂಪರ್ಕ ಕಲ್ಪಿಸಿ ಪತ್ರಕರ್ತರನ್ನು ಬಂಧಿಸಿ ಹಿಂಸಿಸುವ ಕಾರ್ಯ ದೇಶದಾದ್ಯಂತ ಈಗಲೂ ಮುಂದುವರಿದಿದೆ. ಕಳೆದ ಫೆಬ್ರವರಿಯಲ್ಲಿ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಸಿಬ್ಬಂದಿಯ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇರಾನಿ ವಾರ್ತಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಕಾಜ್ಮಿ ಎಂಬ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಐದು ತಿಂಗಳುಗಳಾದರೂ ಅವರು ಬಿಡುಗಡೆಯಾಗಿಲ್ಲ. ಬೆಂಗಳೂರು ಬಾಂಬು ಸ್ಫೋಟಕ್ಕೆ ಸಂಬಂಧಿಸಿದ ಇಬ್ಬರು ಸಾಕ್ಷಿಗಳ ಜತೆ ಮಾತನಾಡಿದ್ದರು ಎನ್ನುವ ಕಾರಣಕ್ಕೆ ದೆಹಲಿಯ ವಾರಪತ್ರಿಕೆಯ ಕೇರಳ ವರದಿಗಾರರಾಗಿದ್ದ ಶಾಹಿನಾ ಎಂಬುವವರ ಮೇಲೆ ಕರ್ನಾಟಕ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.

ಇಫ್ತಿಕರ್ ಗಿಲಾನಿ ಅವರು ನಿರಪರಾಧಿಯಾಗಿ ಹೊರಬಂದ ಮಾತ್ರಕ್ಕೆ ಭಯೋತ್ಪಾದನೆ ಸಂಬಂಧಿ ಆರೋಪಿಗಳೆಲ್ಲರೂ ನಿರಪರಾಧಿಗಳಿರಲಾರರು. ಆದರೆ ಮಾಡಿದ ಆರೋಪಗಳನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲಾಗದ ನಮ್ಮ ಪೊಲೀಸ್ ತನಿಖಾ ವ್ಯವಸ್ಥೆಯಲ್ಲಿನ ದೋಷಗಳಿಂದಾಗಿ ನಿರಪರಾಧಿಗಳು ಅಪರಾಧಿಯಾಗುತ್ತಿರುವುದು ಮಾತ್ರವಲ್ಲ, ಅಪರಾಧಿ ನಿರಪರಾಧಿ ಎಂದು ಅನಿಸಿಕೊಂಡು ತಪ್ಪಿಸಿಕೊಳ್ಳುವ ಸಾಧ್ಯತೆಗಳೂ ಇವೆ.

ಮೊದಲನೆಯದರಷ್ಟೇ ಎರಡನೆಯದೂ ಅಪಾಯಕಾರಿ. ಆರೋಪಗಳನ್ನು ಹೊರಿಸಲು ಒಂದೆರಡು ನಾಲಿಗೆ, ಒಂದಷ್ಟು ಕಿವಿಗಳಷ್ಟೇ ಸಾಕು. ಆದರೆ ಅದನ್ನು ಸಾಬೀತುಪಡಿಸಲು ಅಷ್ಟೇ ಸಾಲದು, ಸತ್ಯದ ನೆರವು ಕೂಡಾ ಬೇಕಾಗುತ್ತದೆ.

Monday, August 27, 2012

ನ್ಯಾಯಾಂಗದ ಗಾಜಿನ ಮನೆಗೆ ಕಲ್ಲು ಹೊಡೆದ ಮಮತಾ August 27, 2012

ನ್ಯಾಯಾಂಗದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಕಲ್ಲೆಸೆಯಲು ಹೊರಟವರು ಮೊದಲು ಗಾಜಿನ ಮನೆಯಲ್ಲಿ ಕೂತಿರುವ ನ್ಯಾಯಾಂಗದ ಕಡೆ  ಕಣ್ಣುಹಾಯಿಸಬೇಕು.  ಮಮತಾ ಬ್ಯಾನರ್ಜಿ ಅವರಿಗೆ ಈ ರೀತಿಯ ಆರೋಪ ಹೊರಿಸುವುದಕ್ಕೆ ವೈಯಕ್ತಿಕವಾದ ಕಾರಣಗಳು ಇದ್ದಿರಬಹುದು.

ಆದರೆ ಅವರು ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಎದೆಮುಟ್ಟಿ ಹೇಳುವ ಧೈರ್ಯ ವಕೀಲರು, ನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನೊಳಗೊಂಡ ನ್ಯಾಯಾಂಗ ವ್ಯವಸ್ಥೆಗೆ ಇದೆಯೇ?

2007ರಲ್ಲಿ `ಟ್ರಾನ್ಸಪರೆನ್ಸಿ ಇಂಟರ್‌ನ್ಯಾಷನಲ್` ಮತ್ತು ದೆಹಲಿ ಮೂಲದ ಸಂಶೋಧನಾ ಸಂಸ್ಥೆ `ಮಾಧ್ಯಮ ಅಧ್ಯಯನ ಕೇಂದ್ರ` ಭಾರತದಲ್ಲಿನ ಭ್ರಷ್ಟಾಚಾರದ ಬಗ್ಗೆ ಅಧ್ಯಯನ ನಡೆಸಿತ್ತು.  ಸಾರ್ವಜನಿಕ ಸೇವೆ ನೀಡುವ ಮತ್ತು ಪಡೆಯುವ ವ್ಯಕ್ತಿಗಳ ಜತೆಗಿನ ಸಂದರ್ಶನವೂ ಸೇರಿದಂತೆ ಇಪ್ಪತ್ತು ರಾಜ್ಯಗಳ 14,405 ವ್ಯಕ್ತಿಗಳ ಪ್ರತಿಕ್ರಿಯೆ ಪಡೆದು ಈ ಎರಡು ಸಂಸ್ಥೆಗಳು ಸಮೀಕ್ಷಾ ವರದಿಯೊಂದನ್ನು ನೀಡಿದ್ದವು.

`ಹನ್ನೊಂದು ಬಗೆಯ ಸಾರ್ವಜನಿಕ ಸೇವೆಗಳನ್ನು ಪಡೆಯಲು ಭಾರತೀಯರು ವರ್ಷಕ್ಕೆ 21,068 ಕೋಟಿ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡುತ್ತಿದ್ದಾರೆ. ಇದರಲ್ಲಿ ನ್ಯಾಯಾಂಗದ ಪಾಲು 2,630 ಕೋಟಿ ರೂಪಾಯಿ.

  ಶೇಕಡಾ 59ರಷ್ಟು ವಕೀಲರು, ಶೇಕಡಾ 30ರಷ್ಟು ನ್ಯಾಯಾಲಯದ ಅಧಿಕಾರಿಗಳು ಮತ್ತು ಶೇಕಡಾ ಐದರಷ್ಟು ನ್ಯಾಯಮೂರ್ತಿಗಳು ಲಂಚಪಡೆಯುತ್ತಿದ್ದಾರೆ` ಎಂದು ಆ ಸಮೀಕ್ಷೆಯಲ್ಲಿ ಹೇಳಲಾಗಿತ್ತು. ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಸ್.ಪಿ.ಭರೂಚಾ ಅವರು ಹತ್ತುವರ್ಷಗಳ ಹಿಂದೆಯೇ ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. `

ಶೇಕಡಾ 20ರಷ್ಟು ನ್ಯಾಯಮೂರ್ತಿಗಳು ಭ್ರಷ್ಟರು` ಎಂಬ ಅವರ ಆರೋಪ ಸಾರ್ವಜನಿಕವಾಗಿ ಸಂಚಲನವನ್ನುಂಟುಮಾಡಿತ್ತು. ಈ ಹತ್ತು ವರ್ಷಗಳ ಅವಧಿಯಲ್ಲಿ ನ್ಯಾಯಾಂಗದ ಭ್ರಷ್ಟಾಚಾರದ ಮಟ್ಟ ಕಡಿಮೆಯಾಗಿದೆ ಎಂದು ಹೇಳಲು ಆಧಾರಗಳು ಸಿಗುತ್ತಿಲ್ಲ, ಹೆಚ್ಚಾಗಿದೆ ಎಂದು ಅನುಮಾನ ಪಡಲು ಕಾರಣಗಳಿವೆ.

ನ್ಯಾ.ಭರೂಚಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಆರುತಿಂಗಳ ನಂತರ ಪಂಜಾಬ್ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಶಾಮೀಲಾಗಿದ್ದ ಕೋಟ್ಯಂತರ ರೂಪಾಯಿ ಲಂಚದ ಆರೋಪದ ಲೋಕಸೇವಾ ಹಗರಣ ಬಯಲಾಯಿತು. ಪ್ರಶ್ನೆಪತ್ರಿಕೆಯ ಸೋರಿಕೆಗೆ ಅವಕಾಶ ನೀಡಿರುವುದು ಮಾತ್ರವಲ್ಲ ಉತ್ತರಪತ್ರಿಕೆಗಳನ್ನು ತಿದ್ದಲು ನ್ಯಾಯಮೂರ್ತಿಗಳು ಅವಕಾಶ ನೀಡಿದ್ದರೆಂದು ರಾಜ್ಯ ಜಾಗೃತದಳ ಆರೋಪ ಮಾಡಿತ್ತು.

ಭೂ ಮಾಫಿಯಾಗಳಿಂದ ಹಣ-ಹೆಂಡ-ಹೆಣ್ಣುಗಳನ್ನು ಪಡೆದು ತೀರ್ಪು ನೀಡಿದ್ದಾರೆಂಬ ಆರೋಪದ ಮೇಲೆ ಸಿಬಿಐ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಶಮಿತ್ ಮುಖರ್ಜಿ ಅವರನ್ನು ಬಂಧಿಸಿತ್ತು. ನ್ಯಾಯಾಲಯದ ಸಿಬ್ಬಂದಿಯ ಭವಿಷ್ಯನಿಧಿ ಹಣವನ್ನು ದುರ್ಬಳಕೆ ಮಾಡಿದ್ದಾರೆಂದು ಸುಪ್ರೀಂಕೋರ್ಟ್‌ನಿಂದ ಹಿಡಿದು ಕೆಳ ನ್ಯಾಯಾಲಯದವರೆಗಿನ 34 ನ್ಯಾಯಮೂರ್ತಿಗಳ ವಿರುದ್ಧ ಆರೋಪ ಕೇಳಿಬಂದಿತ್ತು.

ಅಹ್ಮದಾಬಾದ್‌ನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ 40,000 ರೂಪಾಯಿ ಹಣ ಪಡೆದು ರಾಷ್ಟ್ರಪತಿಗಳ ವಿರುದ್ಧವೇ ಬಂಧನದ ವಾರೆಂಟ್ ಹೊರಡಿಸಿರುವುದನ್ನು ಒಂದು ಟಿವಿಚಾನೆಲ್ ಕುಟುಕುಕಾರ್ಯಾಚರಣೆ ಮೂಲಕ ಬಯಲಿಗೆಳೆದಿತ್ತು. ಅಕ್ರಮ ಗಣಿಗಾರಿಕೆಯ ಆರೋಪ ಹೊತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರಿಗೆ ಸಂಬಂಧಿಸಿದ ಜಾಮೀನು ನೀಡಿಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಆಂಧ್ರಪ್ರದೇಶದ ನಾಲ್ವರು ನ್ಯಾಯಾಧೀಶರು ಕಂಬಿ ಎಣಿಸುತ್ತಿರುವುದು ಇತ್ತೀಚಿನ ಉದಾಹರಣೆ.

ಭ್ರಷ್ಟಾಚಾರದ ವಿಷಯದಲ್ಲಿ ಈಗಲೂ ನ್ಯಾಯಾಂಗವನ್ನು ಕಾರ್ಯಾಂಗ ಮತ್ತು ಶಾಸಕಾಂಗಗಳ ಸಮಕ್ಕೆ ಹೋಲಿಸಲಾಗದು. ನಮ್ಮ ಬಹುಸಂಖ್ಯಾತ ನ್ಯಾಯಮೂರ್ತಿಗಳು ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸುವ ಪ್ರಾಮಾಣಿಕರೆನ್ನುವುದು ನಿಜ. ಆದರೆ ಕೆಳನ್ಯಾಯಾಲಯಗಳಿಗೆ ಸೀಮಿತವಾಗಿದ್ದ ಭ್ರಷ್ಟಾಚಾರದ ವೈರಸ್ ನಿಧಾನವಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೂ ಪ್ರವೇಶಿಸಿದೆ.

ಸಂವಿಧಾನದ ಉಳಿದೆರಡು ಅಂಗಗಳ ರೀತಿಯಲ್ಲಿ ನ್ಯಾಯಾಂಗಕ್ಕೆ ತಗಲಿರುವ ರೋಗವನ್ನು ಸುಲಭದಲ್ಲಿ ನಿಯಂತ್ರಿಸುವುದು ಕಷ್ಟ. ಇದಕ್ಕೆ ಮೊದಲನೆಯ ಕಾರಣ- ನ್ಯಾಯಾಂಗದ ಭ್ರಷ್ಟತೆಯ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಾರ್ಯಾಂಗ ಮತ್ತು ಶಾಸಕಾಂಗ ಮಾತ್ರವಲ್ಲ ಮಾಧ್ಯಮರಂಗವೂ ಉಳಿಸಿಕೊಳ್ಳದೆ ಇರುವುದು. ಎರಡನೆಯ ಕಾರಣ-ಉಳಿದ ಮೂರು ಅಂಗಗಳನ್ನೂ ಮೀರಿದ ವಿಶೇಷ ರಕ್ಷಣೆ (ಇಮ್ಯುನಿಟಿ)ಯನ್ನು ನ್ಯಾಯಾಂಗ ಪಡೆದಿರುವುದು.

ಭಾರತದಲ್ಲಿ ಈಗಲೂ ನ್ಯಾಯಾಂಗ ಎನ್ನುವುದು ಒಂದು `ಪವಿತ್ರಗೋವು`. ಬೀದಿಯಲ್ಲಿ ನಿಂತು ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ಆಡುವ ಮಾತುಗಳನ್ನು ನ್ಯಾಯಮೂರ್ತಿಗಳ ಬಗ್ಗೆ ಮಾತನಾಡಲಾಗದು. ನ್ಯಾಯಾಂಗ ನಿಂದನೆಯ ಕತ್ತಿ ತಲೆ ಮೇಲೆ ಸದಾ ತೂಗುತ್ತಿರುತ್ತದೆ.

ಬಹುಪದರಗಳ ಈ `ಆತ್ಮರಕ್ಷಣೆ`ಯ ವ್ಯವಸ್ಥೆಯೇ ನ್ಯಾಯಾಂಗದ ಆರೋಗ್ಯವನ್ನು ಒಳಗಿಂದೊಳಗೆ ಕೆಡಿಸುತ್ತಿದೆಯೇ?ಈಗಿನ ಕಾನೂನಿನ ಪ್ರಕಾರ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ಪೂರ್ವಾನುಮತಿ ಇಲ್ಲದೆ ನ್ಯಾಯಮೂರ್ತಿಗಳ ವಿರುದ್ಧ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸುವಂತಿಲ್ಲ.

ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದೂ ಸಾಧ್ಯ ಇಲ್ಲ. ಹೈಕೋರ್ಟ್ ಇಲ್ಲವೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳನ್ನು ಸಂಸತ್‌ನ ಎರಡೂ ಸದನಗಳ ಸದಸ್ಯರು ಬಹುಮತದ `ವಾಗ್ದಂಡನೆ` ಮೂಲಕವಷ್ಟೇ ಕಿತ್ತುಹಾಕಬಹುದು. ಆದರೆ  ಇಲ್ಲಿಯವರೆಗೆ ಯಾವ ನ್ಯಾಯಮೂರ್ತಿಯವರನ್ನೂ `ವಾಗ್ದಂಡನೆ`ಯ ಮೂಲಕ ಕಿತ್ತುಹಾಕಲು ಸಂಸತ್‌ಗೆ ಸಾಧ್ಯವಾಗಿಲ್ಲ. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅವರಿಗೆ ವಾಗ್ದಂಡನೆ  ವಿಧಿಸಬೇಕೆಂಬ ಮಸೂದೆಗೆ ಸಂಸತ್‌ನಲ್ಲಿ ಅಂಗೀಕಾರವೇ ಸಿಗದೆ ಬಿದ್ದುಹೋಗಿತ್ತು. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಗೈರುಹಾಜರಾಗಿದ್ದರು.

ನ್ಯಾಯಾಲಯದ ರಿಸೀವರ್ ಆಗಿ ಸ್ವೀಕರಿಸಿದ್ದ 24 ಲಕ್ಷ ರೂಪಾಯಿಯನ್ನು ದುರುಪಯೋಗ ಮಾಡಿಕೊಂಡಿದ್ದ ಕೊಲ್ಕೊತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸೌಮಿತ್ರಸೇನ್ ವಿರುದ್ಧದ ವಾಗ್ದಂಡನೆಗೆ ಲೋಕಸಭೆ ಅಂಗೀಕಾರ ನೀಡಿದರೂ, ಅದು ರಾಜ್ಯಸಭೆಗೆ ಹೋಗುವ ಮೊದಲೇ ಅವರು  ರಾಜೀನಾಮೆ ನೀಡಿದ್ದರು. ತನಿಖೆ ನಡೆಯುತ್ತಿರುವಾಗಲೇ ನ್ಯಾಯಮೂರ್ತಿ ಪಿ.ಡಿ.ದಿನಕರನ್ ರಾಜೀನಾಮೆ ನೀಡಿದ ಕಾರಣ  ಅವರಿಗೂ ವಾಗ್ದಂಡನೆ ನೀಡಲು ಸಾಧ್ಯವಾಗಲಿಲ್ಲ.

ಆರೋಪ ಹೊತ್ತ ನ್ಯಾಯಮೂರ್ತಿಗಳ ವಿಚಾರಣೆ ನಡೆಸುವ ಈಗಿನ ವ್ಯವಸ್ಥೆ ತೀರಾ ದುರ್ಬಲವಾಗಿದೆ. ಇದೊಂದು `ಗೃಹಸಮಿತಿ`. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ನ್ಯಾಯಾಂಗ ಆಯೋಗದಲ್ಲಿ ಹೈಕೋರ್ಟ್‌ನ ತಲಾ ಇಬ್ಬರು ನ್ಯಾಯಮೂರ್ತಿಗಳು ಸದಸ್ಯರು.

ನ್ಯಾಯಮೂರ್ತಿಗಳ ಮೇಲಿನ ಆರೋಪ ಸಾಬೀತಾದಾರೂ ಆಯೋಗ ಹೆಚ್ಚೆಂದರೆ ಆರೋಪಿ ನ್ಯಾಯಮೂರ್ತಿಗಳನ್ನು ಅಮಾನತ್‌ನಲ್ಲಿಡಬಹುದು ಇಲ್ಲವೆ ವರ್ಗಾವಣೆ ಮಾಡಬಹುದು. ಆಯೋಗಕ್ಕೆ ಕಾನೂನುಬದ್ಧ ಅಧಿಕಾರ ಇಲ್ಲ. ಆರೋಪಿ ಸ್ಥಾನದಲ್ಲಿರುವವರು ಆಯೋಗದ ನಿರ್ಧಾರವನ್ನು ಪ್ರಶ್ನಿಸಬಹುದು.

ನ್ಯಾಯಾಂಗ ಎದುರಿಸುತ್ತಿರುವ ಈಗಿನ ಆರೋಪಗಳಿಗೆ ನ್ಯಾಯಮೂರ್ತಿಗಳ ನೇಮಕದಲ್ಲಿರುವ ದೋಷವೂ ಕಾರಣ. 1950ರಿಂದ 1993ರ ವರೆಗೆ ನ್ಯಾಯಮೂರ್ತಿಗಳ ನೇಮಕದ ಅಧಿಕಾರ ಶಾಸಕಾಂಗದ ಕೈಯಲ್ಲಿಯೇ ಇತ್ತು. `ಸೆಕೆಂಡ್ ಜಡ್ಜಸ್` ಎಂದೇ ಜನಪ್ರಿಯವಾಗಿರುವ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ ಒಂಬತ್ತು ಸದಸ್ಯರ ಪೀಠ ಸಂವಿಧಾನದ 124ನೇ ಕಲಂ ಅನ್ನು ಪುನರ್‌ವ್ಯಾಖ್ಯಾನಿಸಿ ನ್ಯಾಯಮೂರ್ತಿಗಳ ನೇಮಕದಲ್ಲಿ ನ್ಯಾಯಾಂಗಕ್ಕೆ ಪರಮಾಧಿಕಾರವನ್ನು ನೀಡಿತ್ತು.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳದ್ದೇ ಅಂತಿಮ ನಿರ್ಧಾರ. ಈ ಬಗ್ಗೆ ಕೇಂದ್ರ ಸರ್ಕಾರದ `ಸಲಹೆ`ಪಡೆದರಷ್ಟೇ ಸಾಕು, `ಅನುಮತಿ` ಬೇಕಾಗಿಲ್ಲ. ಮುಖ್ಯನ್ಯಾಯಮೂರ್ತಿಗಳು ಇಬ್ಬರು ಹಿರಿಯಸಹೋದ್ಯೋಗಿಗಳ ಜತೆ ಸಮಾಲೋಚನೆ ನಡೆಸಿ ಕೈಗೊಳ್ಳುವ ನಿರ್ಧಾರವನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲೇಬೇಕು. ಕೆಲವು ವಿವಾದಾತ್ಮಕ ನ್ಯಾಯಮೂರ್ತಿಗಳ ಪ್ರಕರಣವನ್ನು ಪರಿಶೀಲಿಸಿದರೆ ನೇಮಕಾತಿಯ ಈ ವ್ಯವಸ್ಥೆಯಲ್ಲಿನ ದೋಷ ಸ್ಪಷ್ಟವಾಗುತ್ತದೆ.

ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ಸೌಮಿತ್ರಸೇನ್ ಹಣ ದುರುಪಯೋಗ ಮಾಡಿಕೊಂಡದ್ದು 1993ರಲ್ಲಿ. ಆದರೆ ಅದು ಬೆಳಕಿಗೆ ಬಂದದ್ದು 2009ರಲ್ಲಿ. ನ್ಯಾಯಮೂರ್ತಿ ಸೇನ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಮೊದಲು ಹಳೆಯ ಆರೋಪಗಳನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಯಾಕೆ ಪರಿಶೀಲಿಸಿರಲಿಲ್ಲ? ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾಗ ಪಿ.ಡಿ.ದಿನಕರನ್ ಅವರು ಅಕ್ರಮವಾಗಿ ನೂರಾರು ಎಕರೆ ಜಮೀನು ಕಬಳಿಸಿದ್ದಾರೆ ಎನ್ನುವುದು ಆರೋಪ.

ಆದರೆ ಅದು ಬಯಲಿಗೆ ಬಂದಿರುವುದು ಅವರನ್ನು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ ಸಂದರ್ಭದಲ್ಲಿ. ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದರೆ ಸುಪ್ರೀಂಕೋರ್ಟ್ ಸಮಿತಿ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಹೇಗೆ ನೇಮಿಸಿತು?

ಇದು ಆರೋಪಕ್ಕೊಳಗಾಗಿರುವ ಒಬ್ಬಿಬ್ಬರು ನ್ಯಾಯಮೂರ್ತಿಗಳಿಗೆ ಸಂಬಂಧಿಸಿದ ಲೋಪಗಳಲ್ಲ. ಕಳೆದ ಐದಾರು ವರ್ಷಗಳ ಅವಧಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಹಲವಾರು ನ್ಯಾಯಮೂರ್ತಿಗಳ ಹಿನ್ನೆಲೆ ಸಂಶಯಾಸ್ಪದವಾಗಿಯೇ ಇದ್ದರೂ ಅವರೆಲ್ಲ ಸಲೀಸಾಗಿ  ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

 ಈ ಎಲ್ಲ ಬೆಳವಣಿಗೆಗಳನ್ನು ಅವಲೋಕಿಸಿದ ಯಾರೂ ಕೂಡಾ ನ್ಯಾಯಾಂಗ ಎನ್ನುವುದು 50ವರ್ಷಗಳ ಹಿಂದಿನಷ್ಟೇ ಆರೋಗ್ಯಕರವಾಗಿದೆ ಎಂದು ಹೇಳಲಾರರು. ಆರೋಗ್ಯ ಹಾಳಾಗಿದ್ದರೆ ಚಿಕಿತ್ಸೆ ಅನಿವಾರ್ಯ. ಆದರೆ ನಮ್ಮ ಸಂವಿಧಾನದಲ್ಲಿ ನ್ಯಾಯಾಂಗದ ಅನಾರೋಗ್ಯಕ್ಕೆ ಔಷಧಿ ಏನೆಂದು ಹೇಳಿಲ್ಲ.

ಭವಿಷ್ಯದಲ್ಲಿ ನ್ಯಾಯಮೂರ್ತಿಗಳ ಪ್ರಾಮಾಣಿಕತೆಯನ್ನೇ ಸಂಶಯಿಸುವಂತಹ ದಿನಗಳು ಬರಬಹುದೆಂದು ಸಂವಿಧಾನ ರಚನೆಯ ಕಾಲದಲ್ಲಿ  ಸ್ವತ: ವಕೀಲರಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ಯಾರೂ ಊಹಿಸಿರಲಿಲ್ಲವೇನೋ? ನ್ಯಾಯಾಂಗವನ್ನು ಪ್ರಶ್ನಾತೀತವಾಗಿ ಉಳಿಸಿಕೊಳ್ಳಬೇಕೆಂಬ ಅವರ ಸದಾಶಯವೂ ಇದಕ್ಕೆ ಕಾರಣ ಇರಬಹುದು. ಆದರೆ ಈ ಭರವಸೆಯನ್ನು ನ್ಯಾಯಾಂಗ ಉಳಿಸಿಕೊಂಡಿದೆಯೇ?

ಇತ್ತೀಚಿನ ವರ್ಷಗಳಲ್ಲಿ ಬಯಲಾಗುತ್ತಿರುವ ನ್ಯಾಯಾಂಗದ ಹಗರಣಗಳ ನಂತರ ನ್ಯಾಯಮೂರ್ತಿಗಳನ್ನು ಕೂಡಾ ಸಮಾಜಕ್ಕೆ ಉತ್ತರದಾಯಿಯನ್ನಾಗಿ ಮಾಡಬೇಕೆಂಬ ಕೂಗು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂವಿಧಾನ ಪುನರ್‌ಪರಿಶೀಲನಾ ಆಯೋಗ  `ರಾಷ್ಟ್ರೀಯ ನ್ಯಾಯಾಂಗ ಆಯೋಗ` ರಚನೆಗೆ ಶಿಫಾರಸು ಮಾಡಿತ್ತು. ಎನ್‌ಡಿಎ ಸರ್ಕಾರದ ಕಾಲದಲ್ಲಿ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಯ ಅಧಿಕಾರವನ್ನೂ ಒಳಗೊಂಡ `ರಾಷ್ಟ್ರೀಯ ನ್ಯಾಯಾಂಗ ಆಯೋಗ`ದ ಮಸೂದೆಯನ್ನು ರೂಪಿಸಿತ್ತು.

ಕೇಂದ್ರ ಕಾನೂನು ಸಚಿವರು ಮತ್ತು ಕೇಂದ್ರ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರನ್ನೊಳಗೊಂಡ ಆಯೋಗದ ಮುಂದೆ ನ್ಯಾಯಮೂರ್ತಿಗಳು ಆಸ್ತಿ ಘೋಷಣೆ ಮಾಡಬೇಕು ಎಂದು ಮಸೂದೆ ಹೇಳಿತ್ತು. ಆಗಲೂ ನ್ಯಾಯಮೂರ್ತಿಗಳು ಆಯೋಗ ರಚನೆಯನ್ನು ವಿರೋಧಿಸಿದ್ದರು.

ವಿಳಂಬವಾಗಿಯಾದರೂ ಈ ವರ್ಷದ ಮೇ ತಿಂಗಳಲ್ಲಿ ಲೋಕಸಭೆ `ನ್ಯಾಯಾಂಗ ಗುಣಮಟ್ಟ ಮತ್ತು ಉತ್ತರದಾಯಿತ್ವ ಮಸೂದೆ 2002`ಕ್ಕೆ ಅನುಮೋದನೆ ನೀಡಿದೆ. 2011ರಲ್ಲಿ ಮಂಡನೆಯಾಗಿದ್ದ ಈ ಮಸೂದೆಯನ್ನು ತಿದ್ದುಪಡಿಯೊಂದಿಗೆ ಮರಳಿ ಮಂಡಿಸಲಾಗಿತ್ತು. ಆದರೆ ಆಗಲೇ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಅವರು  ಮಸೂದೆಯ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯಾಯಾಂಗದ ಸುಧಾರಣೆಯ ಪ್ರಯತ್ನ ನಡೆದಾಗಲೆಲ್ಲ, ಅದನ್ನು ನ್ಯಾಯಾಂಗದ ಮೇಲೆ ಶಾಸಕಾಂಗದ ಆಕ್ರಮಣ ಎಂದೇ ಬಿಂಬಿಸುತ್ತಾ ನ್ಯಾಯಮೂರ್ತಿಗಳು ಆತ್ಮರಕ್ಷಣೆಗಿಳಿಯುವುದು ಸಹಜ. ಈಗಿನ ಮುಖ್ಯನ್ಯಾಯಮೂರ್ತಿಗಳು ಅದನ್ನು ಮಾತಿನಲ್ಲಿ ಹೇಳದೆ ಇದ್ದರೂ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ ತನ್ನ ಕಬಂಧಬಾಹುಗಳನ್ನು ಎಲ್ಲೆಡೆ ಚಾಚುತ್ತಿರುವ ಸಮಯದಲ್ಲಿ ಎಲ್ಲ ವ್ಯವಸ್ಥೆಗಳೂ  ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಿ ಆಗಿರಬೇಕು ಎಂದು ಸಾರ್ವಜನಿಕರು ಬಯಸುತ್ತಿದ್ದಾರೆ. ಇಂತಹ ಸಮಯದಲ್ಲಿ ಬಹಳ ದಿನಗಳ ಕಾಲ ನ್ಯಾಯಾಂಗ ಮುಸುಕುಹಾಕಿಕೊಂಡು ತನ್ನನ್ನು ರಕ್ಷಿಸಿಕೊಳ್ಳುವುದು ಸಾಧ್ಯವಾಗಲಾರದು.

Friday, August 24, 2012

ಬೂದಿ ಮುಚ್ಚಿದ ಕೆಂಡದಂತೆ ಸುಡುತ್ತಿರುವ ವಲಸೆ ಸಮಸ್ಯೆ August 20, 2012

ಯಾರೋ ಕಿಡಿಗೇಡಿಗಳು ಹಚ್ಚಿದ ಗಾಳಿಮಾತಿನ ಕಿಡಿಗಳಲ್ಲಿ ತಮ್ಮನ್ನು ಸುಟ್ಟುಬಿಡುವ ಬೆಂಕಿಯನ್ನು ಕಂಡು ಬೆದರಿ ಬೆಂಗಳೂರು ಬಿಟ್ಟು ಓಡಿಹೋಗಿರುವ ಈಶಾನ್ಯ ರಾಜ್ಯದ ಜನರು ಮುಂದಿನ ದಿನಗಳಲ್ಲಿ ಮರಳಿ ಬರಬಹುದು. ತಾವು ಊರು ಬಿಟ್ಟು ಹೋಗುವಂತಹ ಭಯಾನಕ ಪರಿಸ್ಥಿತಿ ಬೆಂಗಳೂರಿನಲ್ಲಿ ಇಲ್ಲ ಎನ್ನುವುದು ನಿಧಾನವಾಗಿ ಅರಿವಾಗಿ ಅವರು ಪಶ್ಚಾತಾಪಪಡಲೂ ಬಹುದು.
 
ಈ ಭಯಭೀತ ವಾತಾವರಣದ ನಿರ್ಮಾಣಕ್ಕೆ ಕಾರಣರಾದವರನ್ನು ಪೊಲೀಸರು ಬಂಧಿಸಿ ಸಂಚನ್ನು ಬಯಲುಮಾಡಿದರೆ ಮುಖ್ಯಮಂತ್ರಿಗಳು ಮತ್ತು ಅವರ ಸಹೊದ್ಯೋಗಿಗಳು ನೀಡಿರುವ ಆಶ್ವಾಸನೆಯನ್ನು ಅವರು ನಂಬಲೂಬಹುದು. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸದೆ ಇದ್ದರೆ ತಮ್ಮನ್ನು ತಾವೇ ಸಮಾಧಾನಪಡಿಸಿಕೊಂಡು ಇದೊಂದು ದುಃಸ್ವಪ್ನ ಎಂದು ಅವರು ಮರೆತುಬಿಡಬಹುದು. ಇಷ್ಟಕ್ಕೆ ಎಲ್ಲ ಸಮಸ್ಯೆಗಳು ಶಾಶ್ವತ ಪರಿಹಾರ ಕಂಡು ವಲಸೆ ಬಂದವರು ಮತ್ತು ಸ್ಥಳೀಯರು ಹಾಲುಜೇನಿನಂತೆ ಒಂದಾಗಿ ನೂರುಕಾಲ ನೆಮ್ಮದಿಯಿಂದ ಬಾಳ್ವೆಮಾಡಬಹುದೇ?

ಪೊಲೀಸರ ತನಿಖೆ, ಅಪರಾಧಿಗಳ ಪತ್ತೆ, ರಾಜ್ಯದ ರಾಜಕಾರಣಿಗಳೆಲ್ಲ ಕೂಡಿ ನೀಡಿರುವ ಭದ್ರತೆಯ ಆಶ್ವಾಸನೆ ...ಇವೆಲ್ಲವೂ ಮೊನ್ನೆ ನಡೆದ ನಿರ್ದಿಷ್ಟ ದುರ್ಘಟನೆಗೆ ತಾತ್ಕಾಲಿಕ ರೂಪದ ಪರಿಹಾರ ಅಷ್ಟೆ. ಇದಕ್ಕೆ ಕಾರಣವಾದ ಸಮಸ್ಯೆಯ ಬೇರುಗಳು ಇನ್ನೂ ಆಳದಲ್ಲಿವೆ. 

ಅವುಗಳನ್ನು ಹುಡುಕಿತೆಗೆದು ಪರಿಹಾರ ಕಂಡುಕೊಳ್ಳದೆ ಇದ್ದಲ್ಲಿ ಇಂತಹ ಸಂಘರ್ಷಗಳು ಪುನರಾವರ್ತನೆಯಾಗುವುದನ್ನು ತಡೆಯುವುದು ಸಾಧ್ಯವಾಗಲಾರದು. ಆ ಸಮಸ್ಯೆಯ ಹೆಸರು ವಲಸೆ. ಬೆಂಗಳೂರನ್ನು ಮಾತ್ರವಲ್ಲ ದೇಶದ ಎಲ್ಲ ಮಹಾನಗರಗಳನ್ನೂ ಕಾಡುತ್ತಿರುವ ಮತ್ತು ಭವಿಷ್ಯದಲ್ಲಿ ಭೂತಾಕಾರವಾಗಿ ಬೆಳೆದು ಕಾಡಲಿರುವ ಸಮಸ್ಯೆ ಇದು. ಕೇಂದ್ರ ಯೋಜನಾ ಆಯೋಗದ ಮಟ್ಟದಲ್ಲಿ ಈ ಬಗ್ಗೆ ಅಧ್ಯಯನಗಳು ನಡೆಯುತ್ತಲೇ ಇದ್ದರೂ ಪರಿಹಾರವನ್ನು ಮಾತ್ರ ಕಂಡುಕೊಳ್ಳಲಾಗಿಲ್ಲ.

ಬಹುಶಃ ಹುಟ್ಟಿದ ಊರಿನಲ್ಲಿಯೇ ಬಯಸಿದ್ದೆಲ್ಲವೂ ಸಿಕ್ಕಿಬಿಟ್ಟರೆ ಯಾರೂ ಊರು ಬಿಡಲಾರರೇನೋ? ವಲಸೆ ಬಂದವರಲ್ಲಿ ಯಾರೂ ಕೂಡಾ ಬಹಳ ಸಂತೋಷದಿಂದ ಊರು ಬಿಟ್ಟು ಬಂದಿರುವುದಿಲ್ಲ, ವಲಸೆ ಬಂದವರೆಲ್ಲರೂ ಬಹಳ ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದು ಹೇಳುವುದೂ ಸಾಧ್ಯ ಇಲ್ಲ.
 
ವಲಸೆಕೋರರ ಮನಸ್ಸು ಇರುವುದೇ ಹಾಗೆ. ಹುಟ್ಟೂರಿನ ಬೇರು ಕಳಚಿಕೊಂಡು ಬೇರೆ ಊರುಗಳಲ್ಲಿ ನೆಲೆ ಕಂಡುಕೊಂಡಿರುವ ಈ ಜನ ಸದಾ ಅಸುರಕ್ಷತೆಯಿಂದ ಬಳಲುತ್ತಾ ಇರುತ್ತಾರೆ. ಬೀದಿಯಲ್ಲಿ ಅಪರಿಚಿತರು ಸುಮ್ಮನೆ ದಿಟ್ಟಿಸಿ ನೋಡಿದರೂ ಅವರ ಎದೆ ಬಡಿದುಕೊಳ್ಳುತ್ತದೆ. ಒಂಟಿಯಾಗಿ ಹೊರಟಾಗ ಪಕ್ಕದಲ್ಲಿ ನೆರಳೊಂದು ಹಾದುಹೋದರೂ ಅವರು ಬೆಚ್ಚಿಬೀಳುತ್ತಾರೆ. 

ಸಣ್ಣಪುಟ್ಟ ಕಾಯಿಲೆಗಳು ಕೂಡಾ ಅವರನ್ನು ಮಾನಸಿಕವಾಗಿ ಇನ್ನಷ್ಟು ದುರ್ಬಲರನ್ನಾಗಿ ಮಾಡುತ್ತದೆ.  ಮನೆಯಿಂದ ಹೊರಗೆಹೋದವರು ಹಿಂದಿರುಗುವುದು ವಿಳಂಬವಾದ ಕೂಡಲೇ ಕೆಟ್ಟಯೋಚನೆಗಳು ಸುಳಿದಾಡುತ್ತಿರುತ್ತವೆ.
 
ಇದರ ಜತೆಗೆ ಊರಲ್ಲಿರುವ ವಯಸ್ಸಾದ ತಂದೆ-ತಾಯಿ, ಜತೆಯಲ್ಲಿ ಆಡಿ ಬೆಳೆದ ಸೋದರ - ಸೋದರಿಯರು, ಸಲಿಗೆಯಿಂದ ಎಲ್ಲವನ್ನೂ ಹಂಚಿಕೊಳ್ಳಲು ಸಾಧ್ಯ ಇರುವಂತಹ ಗೆಳೆಯ-ಗೆಳತಿಯರು..ಹೀಗೆ ಎಲ್ಲರ ನೆನಪುಗಳು ಕಾಡಲಾರಂಭಿಸುತ್ತವೆ. ಇವೆಲ್ಲ ಹೇಳಿ ಅರ್ಥವಾಗುವಂತಹದ್ದಲ್ಲ, ಅನುಭವಿಸಿ ತಿಳಿದುಕೊಳ್ಳಬೇಕು.

ನೂರಾರು ಬಗೆಯ ವಲಸೆಗಳಿದ್ದರೂ ಇದರಲ್ಲಿ ಪ್ರಧಾನವಾಗಿ ಎರಡು ಗುಂಪುಗಳಿವೆ. ಮೊದಲನೆಯದು ದೈಹಿಕಶ್ರಮದ ಉದ್ಯೋಗ ಮಾಡುತ್ತಿರುವವರ ಗುಂಪು, ಎರಡನೆಯದು ಕಚೇರಿಗಳಲ್ಲಿ ಬಿಳಿ ಕಾಲರ್ ಉದ್ಯೋಗದಲ್ಲಿರುವವರ ಗುಂಪು. ಬರಗಾಲ, ನೆರೆಹಾವಳಿ, ಭೂಕಂಪ ಮೊದಲಾದ ಪ್ರಾಕೃತಿಕ ವಿಕೋಪಗಳಿಂದಾಗಿ ನಿರ್ಗತಿಕರಾದವರು, ಜಮೀನ್ದಾರಿ ವ್ಯವಸ್ಥೆಯ ಶೋಷಣೆಗೆ ಸಿಕ್ಕವರು, ಜಾತಿ-ಧರ್ಮ ಆಧಾರಿತ ದ್ವೇಷ ಭುಗಿಲೆದ್ದಾಗ ಪ್ರಾಣಬೆದರಿಕೆಯಿಂದ ಓಡಿ ಬಂದವರೆಲ್ಲ ಮೊದಲ ಗುಂಪಿಗೆ ಸೇರಿದವರು. 

ಇದಕ್ಕೆ ಉತ್ತಮ ಉದಾಹರಣೆ `ಬಿಮಾರು` ಎಂಬ ಹಣೆಪಟ್ಟಿಹಚ್ಚಿಕೊಂಡಿರುವ ಬಿಹಾರ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಉತ್ತರಪ್ರದೇಶಗಳದ್ದು. ಭಾರತದಲ್ಲಿ ಈಗಲೂ ಅತಿಹೆಚ್ಚಿನ ಪ್ರಮಾಣದಲ್ಲಿ ವಲಸೆ ನಡೆಯುತ್ತಿರುವುದು ರಾಜ್ಯಗಳಿಂದ. ಬಿಹಾರ ಮತ್ತು ಉತ್ತರಪ್ರದೇಶ ರಾಜ್ಯಗಳು ಉಳಿದೆರಡು ರಾಜ್ಯಗಳಷ್ಟು ಬರಪೀಡಿತ ಅಲ್ಲದೆ ಇದ್ದರೂ ಅಲ್ಲಿ ಈಗಲೂ ಜೀವಂತವಾಗಿರುವ ಊಳಿಗಮಾನ್ಯ ವ್ಯವಸ್ಥೆಯಿಂದಾಗಿ ಸಮಾನವಾಗಿ ಭೂಮಿ ಹಂಚಿಕೆ ಆಗಿಲ್ಲ. 

ಶೇಕಡಾ 80ರಷ್ಟು ಜನರ ಕೈಯಲ್ಲಿ ಒಟ್ಟು ಭೂಮಿಯ ಶೇಕಡಾ 20ರಷ್ಟಿದ್ದರೆ, ಶೇಕಡಾ 20ರಷ್ಟು ಜನರ ಕೈಯಲ್ಲಿ ಒಟ್ಟುಭೂಮಿಯ ಶೇಕಡಾ 80ರಷ್ಟು ಭೂಮಿ ಇದೆ. ಮೊದಲು ಡಕಾಯಿತರು, ನಂತರದ ದಿನಗಳಲ್ಲಿ ಮಾವೋವಾದಿಗಳು ಹುಟ್ಟಿಕೊಂಡದ್ದಕ್ಕೆ ಇದೂ ಕಾರಣ.

 ಬಿಹಾರಿಗಳ ರೀತಿಯಲ್ಲಿಯೇ ಇತ್ತೀಚೆಗೆ ಹೆಚ್ಚು ಸಂಖ್ಯೆಯಲ್ಲಿ ವಲಸೆ ಹೋಗುತ್ತಿರುವವರು ಈಶಾನ್ಯ ರಾಜ್ಯದ ಜನರು. ದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕೊತ್ತಾಗಳಂತಹ ಮಹಾನಗರಗಳಲ್ಲಿ ಇವರ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಷ್ಟ್ರ ಮತ್ತು ರಾಜ್ಯಗಳನ್ನು ಆಳಿದವರ ನಿರಂತರ ರಾಜಕೀಯ ನಿರ್ಲಕ್ಷ, ಕರ್ತವ್ಯಲೋಪ ಮತ್ತು ಆಂತರಿಕವಾದ ಸಾಮಾಜಿಕ ಬಿಕ್ಕಟ್ಟಿನಿಂದಾಗಿ ಕಳೆದ ನಾಲ್ಕೈದು ದಶಕಗಳಿಂದ ಆ ರಾಜ್ಯಗಳಲ್ಲಿನ ಸಾಮಾನ್ಯ ಜನ ಅನೇಕ ಬಗೆಯ ಕಷ್ಟ-ನಷ್ಟಗಳಿಗೆ ಈಡಾಗುತ್ತಾ ಬಂದಿದ್ದಾರೆ.
 
ಕೇಂದ್ರ ಯೋಜನಾ ಆಯೋಗ ನಡೆಸಿರುವ ಸಾಮಾಜಿಕ-ಆರ್ಥಿಕ ಅಧ್ಯಯನಗಳು ಕೂಡಾ ಇದನ್ನೆ ಹೇಳುತ್ತಿವೆ. ಇದರ ಪ್ರಕಾರ  ಕಳೆದ 1996-97ರಿಂದ 2007-2008ರ ಅವಧಿಯ ಹತ್ತುವರ್ಷಗಳಲ್ಲಿ ಕೃಷಿ ಕ್ಷೇತ್ರದ ಸರಾಸರಿ ಅಭಿವೃದ್ಧಿ ದರ ಕರ್ನಾಟಕದಲ್ಲಿ ಶೇಕಡಾ 7.16, ಆಂಧ್ರ ಪ್ರದೇಶದಲ್ಲಿ ಶೇಕಡಾ 6.82 ಮತ್ತು ಗುಜರಾತ್‌ನಲ್ಲಿ ಶೇಕಡಾ 7.46 ಆಗಿದ್ದರೆ, ಅದು ಅಸ್ಸಾಂನಲ್ಲಿ ಶೇಕಡಾ 1.51, ಮಣಿಪುರದಲ್ಲಿ ಶೇಕಡಾ 1.31, ಅರುಣಾಚಲ ಪ್ರದೇಶದಲ್ಲಿ ಶೇಕಡಾ 4.49, ನಾಗಲ್ಯಾಂಡ್‌ನಲ್ಲಿ ಶೇಕಡಾ 4.92, ತ್ರಿಪುರದಲ್ಲಿ ಶೇಕಡಾ 3.74, ಮಿಜೋರಾಂನಲ್ಲಿ ಶೇಕಡಾ 2.85, ಮತ್ತು ಮೇಘಾಲಯದಲ್ಲಿ ಶೇಕಡಾ 5.06 ಆಗಿದೆ. ಈ ರಾಜ್ಯಗಳ ಜತೆ ಸೇರಿಸಬಹುದಾದ ಇನ್ನೊಂದು ರಾಜ್ಯ ಒರಿಸ್ಸಾ. 

ಹತ್ತು ವರ್ಷಗಳ ಅವಧಿಯಲ್ಲಿ ಆ ರಾಜ್ಯದ ಕೃಷಿಕ್ಷೇತ್ರದ ಅಭಿವೃದ್ಧಿ ದರ ಶೇಕಡಾ 2.93ರಲ್ಲಿಯೇ ಇದೆ. ಕೃಷಿಕ್ಷೇತ್ರದ ಜತೆಯಲ್ಲಿ ದುಡಿಯುವ ಕೈಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೀಡುವ ಕೈಗಾರಿಕಾ ಕ್ಷೇತ್ರದ ಸ್ಥಿತಿ ಭಿನ್ನವಾಗಿಲ್ಲ. 1997-98ರಿಂದ 2007-08ರ ಅವಧಿಯ ಹತ್ತು ವರ್ಷಗಳಲ್ಲಿ ಕೈಗಾರಿಕಾ ಕ್ಷೇತ್ರದ ಸರಾಸರಿ ಅಭಿವೃದ್ಧಿ ದರ ಕರ್ನಾಟಕದಲ್ಲಿ ಶೇಕಡಾ 8.36 ಮತ್ತು ಆಂಧ್ರಪ್ರದೇಶದಲ್ಲಿ ಶೇಕಡಾ 6.61 ಆಗಿದ್ದರೆ, ಇದು ಅಸ್ಸಾಂನಲ್ಲಿ ಶೇಕಡಾ 1.51, ಅರುಣಾಚಲಪ್ರದೇಶದಲ್ಲಿ ಶೇಕಡಾ 4.49, ಮಣಿಪುರದಲ್ಲಿ ಶೇಕಡಾ 1.31, 

ಮೇಘಾಲಯದಲ್ಲಿ ಶೇಕಡಾ 5.06, ಮಿಜೋರಾಂನಲ್ಲಿ ಶೇಕಡಾ 2.85, ನಾಗಲ್ಯಾಂಡ್‌ನಲ್ಲಿ ಶೇಕಡಾ 4.92 ಮತ್ತು ತ್ರಿಪುರದಲ್ಲಿ ಶೇಕಡಾ 3.74 ಆಗಿದೆ. ಬಡತನದ ರೇಖೆಗಿಂತ ಕೆಳಗಿರುವವರ ಪ್ರಮಾಣ ಕರ್ನಾಟಕದಲ್ಲಿ ಶೇಕಡಾ 23.6 ಮತ್ತು ಆಂಧ್ರಪ್ರದೇಶದಲ್ಲಿ ಶೇಕಡಾ 21.1 ಆಗಿದ್ದರೆ, ಮಣಿಪುರದಲ್ಲಿ ಶೇಕಡಾ 47.1,ಅಸ್ಸಾಂನಲ್ಲಿ ಶೇಕಡಾ 40, ಅರುಣಾಚಲ ಪ್ರದೇಶದಲ್ಲಿ ಶೇಕಡಾ 26 ಆಗಿದೆ. ಆರೋಗ್ಯ, ಕುಡಿಯುವ ನೀರಿನ ಪೂರೈಕೆ, ಮೂಲಸೌಕರ್ಯ ಇತ್ಯಾದಿ ಮಾನವ ಸಂಪನ್ಮೂಲ ಅಭಿವೃದ್ಧಿಯ ಇತರ 

ಸೂಚ್ಯಂಕಗಳಲ್ಲಿಯೂ ಈಶಾನ್ಯ ರಾಜ್ಯಗಳು ದಕ್ಷಿಣದ ರಾಜ್ಯಗಳಿಂದ ಹಿಂದೆ ಉಳಿದಿವೆ.
ಸಾಮಾನ್ಯ ಓದು-ಬರಹಗಳಿಗಷ್ಟೇ ಸೀಮಿತಗೊಳಿಸಿ ಲೆಕ್ಕಹಾಕುವ ಸಾಕ್ಷರತೆಯ ಪ್ರಮಾಣದಲ್ಲಿ ಮಾತ್ರ ಈಶಾನ್ಯರಾಜ್ಯಗಳ ಸಾಧನೆ ಇತರ ಹಲವಾರು ರಾಜ್ಯಗಳಿಗಿಂತ ಉತ್ತಮವಾಗಿದೆ. ಸಾಕ್ಷರರ ಪ್ರಮಾಣ ರಾಷ್ಟ್ರಮಟ್ಟದಲ್ಲಿ ಶೇಕಡಾ 74.4 ಮತ್ತು ಕರ್ನಾಟಕದಲ್ಲಿ ಶೇಕಡಾ 75.60 ಆಗಿದೆ. ಅಸ್ಸಾಂ (ಶೇಕಡಾ 73.18) ರಾಜ್ಯವೊಂದನ್ನು ಹೊರತುಪಡಿಸಿ ಮಣಿಪುರ ( ಶೇಕಡಾ 80) ಮಿಜೋರಾಂ (ಶೇಕಡಾ 91.58) 

ನಾಗಲ್ಯಾಂಡ್ (ಶೇಕಡಾ 80.4),ಮೇಘಾಲಯ (ಶೇಕಡಾ 75.58) ಮತ್ತು ತ್ರಿಪುರ (ಶೇಕಡಾ 87.75) ರಾಜ್ಯಗಳು ದಕ್ಷಿಣದ ಕೆಲವು ರಾಜ್ಯಗಳಿಗಿಂತಲೂ ಮುಂದೆ ಇವೆ. ಆದರೆ ಉನ್ನತ ಶಿಕ್ಷಣದ ಕ್ಷೇತ್ರಗಳಲ್ಲಿ ಈಶಾನ್ಯರಾಜ್ಯಗಳು ಹಿಂದೆ ಉಳಿದಿವೆ. ಇದರಿಂದಾಗಿ ಆ ರಾಜ್ಯಗಳಲ್ಲಿ ವೈದ್ಯರು, ಎಂಜಿನಿಯರ್‌ಗಳು, ವಿಜ್ಞಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲ. ಈ ಕಾರಣದಿಂದಾಗಿಯೇ ಉನ್ನತ ಶಿಕ್ಷಣವನ್ನರಸಿಕೊಂಡು ಆ ರಾಜ್ಯಗಳ ವಿದ್ಯಾರ್ಥಿಗಳು ದೆಹಲಿ, ಬೆಂಗಳೂರು, ಹೈದರಾಬಾದ್, ಪುಣೆಯಂತಹ ಮಹಾನಗರಗಳಿಗೆ ಬರುತ್ತಿದ್ದಾರೆ.

ಸಾಮಾನ್ಯವಾಗಿ ದೈಹಿಕ ಶ್ರಮದ ಉದ್ಯೋಗ ಮಾಡಲು ವಲಸೆ ಬರುವವರನ್ನು ಮಹಾನಗರಗಳು ತೆರೆದ ಬಾಹುಗಳಿಂದ ಸ್ವಾಗತಿಸುತ್ತವೆ. ನಗರವಾಸಿಗಳ ಚಾಕರಿ ಮಾಡಲು ಕೂಲಿಕಾರ್ಮಿಕರು ಬೇಕಾಗುತ್ತಾರೆ. ಈಗಲೂ ಬಿಹಾರ,ರಾಜಸ್ತಾನ, ಉತ್ತರಪ್ರದೇಶ, ಜಾರ್ಖಂಡ್ ಮೊದಲಾದ ರಾಜ್ಯಗಳಿಂದ ಬರುವ ಕೂಲಿಕಾರ್ಮಿಕರಿಲ್ಲದೆ ಹೋದರೆ ಮಹಾನಗರಗಳಲ್ಲಿನ ಕಟ್ಟಡ ನಿರ್ಮಾಣ ಕೆಲಸ ನಡೆಯಲಾರದು.
 
ವಲಸೆ ಸಮಸ್ಯೆ ಉಲ್ಬಣಗೊಂಡಿರುವುದು  ಆರ್ಥಿಕ ಉದಾರೀಕರಣದ ನಂತರದ ದಿನಗಳಲ್ಲಿ ಬಿಳಿಕಾಲರ್ ಉದ್ಯೋಗಗಳನ್ನು ಅರಸುತ್ತಾ  ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗತೊಡಗಿದಾಗ. ಮುಂಬೈ, ಕೊಲ್ಕೊತ್ತಾ, ದೆಹಲಿಗಳಿಗೆ ಸೀಮಿತವಾಗಿದ್ದ ಈ ಸಂಘರ್ಷ ಈಗ ಬೆಂಗಳೂರು ಮಹಾನಗರದಲ್ಲಿಯೂ ಕಾಣಿಸಿಕೊಂಡಿದೆ.
 
ಬಿಳಿ ಬಣ್ಣದ, ನೋಡಲು ವಿದೇಶಿಯರಂತೆ ಕಾಣುವ, ಇಂಗ್ಲಿಷ್ ಮಾತನಾಡಬಲ್ಲ ಈಶಾನ್ಯ ರಾಜ್ಯಗಳ ಯುವಕ-ಯುವತಿಯರು ಮಹಾನಗರಗಳ ಆತಿಥ್ಯ, ವೈದ್ಯಕೀಯ, ಪ್ರವಾಸೋದ್ಯಮ, ಸೌಂದರ್ಯವರ್ಧನೆ ಮೊದಲಾದ ಕ್ಷೇತ್ರಗಳ ಅವಶ್ಯಕತೆಗಳಿಗೆ ಹೇಳಿ ಮಾಡಿಸಿದಂತಿದ್ದಾರೆ.
 
ಉದ್ಯೋಗಾವಕಾಶ ಹೆಚ್ಚುತ್ತಿದ್ದಂತೆ ಆ ರಾಜ್ಯಗಳ ವಲಸೆಯ ಪ್ರಮಾಣ ಕೂಡಾ ಹೆಚ್ಚಾಗತೊಡಗಿದೆ. ಈಶಾನ್ಯರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಕೂಡಾ ವಲಸೆಹೋಗಲು ಜನರನ್ನು ದೂಡುತ್ತಿರುವ ಹಾಗೆ ಕಾಣುತ್ತಿದೆ. ಇಲ್ಲಿಯವರೆಗೆ ಪೊಲೀಸರು ನಡೆಸಿರುವ ತನಿಖೆಯ ಪ್ರಕಾರ ಕಳೆದ ವಾರ ಇಲ್ಲಿ ನಡೆದ ಘಟನೆಗಳಿಗೆ ವಲಸೆಯ ಸಮಸ್ಯೆ ನೇರವಾಗಿ ಕಾರಣ ಆಗಿರಲಾರದೆಂದು ಅನಿಸಿದರೂ ಎಚ್ಚರಿಕೆಯ ಗಂಟೆಗಳಂತಿರುವ ಇಂತಹ ಘಟನೆಗಳನ್ನು ನಿರ್ಲಕ್ಷಿಸಲಾಗದು.

ಭಾರತದ ಯಾವ ಮೂಲೆಯಲ್ಲಿಯಾದರೂ ಬದುಕುವ ಹಕ್ಕನ್ನು ಸಂವಿಧಾನ ನೀಡಿರುವುದು ನಿಜ. ಈ ಅಸ್ತ್ರವನ್ನೇ ಎತ್ತಿಕೊಂಡು ವಲಸೆಯನ್ನು ಸಮರ್ಥಿಸುವ ರೀತಿಯಲ್ಲಿಯೇ ಭಾಷಾವಾರು ಪ್ರಾಂತ್ಯ ರಚನೆಯ ಆಶಯವನ್ನು ಮುಂದಿಟ್ಟುಕೊಂಡು ವಲಸೆಯನ್ನು ಪ್ರಶ್ನಿಸಲು ಕೂಡಾ ಸಾಧ್ಯ. ಆದರೆ ಇಂತಹ ತರ್ಕ-ಕುತರ್ಕಗಳ ಮೂಲಕ ವಲಸೆಯಿಂದಾಗಿ ಹುಟ್ಟಿಕೊಳ್ಳುವ ನೂರಾರು ಬಗೆಯ ಸಂಘರ್ಷಗಳನ್ನು ತಡೆಯಲಿಕ್ಕಾಗದು. 

ವಲಸೆಯ ಮೂಲ ಕಾರಣ ರಾಜ್ಯಗಳ ಅಸಮಾನ ಅಭಿವೃದ್ಧಿಯಲ್ಲಿದೆ. ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಮತ್ತು ಅಭಿವೃದ್ಧಿಯ ಪ್ಯಾಕೇಜ್‌ಗಳನ್ನು ನೀಡಿದರಷ್ಟೇ ಸಾಲದು. ಆ ರಾಜ್ಯಗಳ ಆಡಳಿತ ಸೂತ್ರ ಹಿಡಿದವರು ಪ್ರಜೆಗಳ ಮೂಲಭೂತ 

ಅವಶ್ಯಕತೆಗಳನ್ನು ಮೂಲ ಸೌಕರ್ಯಗಳನ್ನು ಒದಗಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು, ಇಲ್ಲದೆ ಹೋದರೆ ಹಿಂದುಳಿದ ರಾಜ್ಯಗಳನ್ನು ಆಳುವವರು ಮಾಡಿದ ತಪ್ಪಿಗೆ ನಾವು ಯಾಕೆ ಬೆಲೆ ಕೊಡಬೇಕು ಎಂದು ಅಭಿವೃದ್ಧಿಹೊಂದುತ್ತಿರುವ ರಾಜ್ಯಗಳ ಜನರ ಪ್ರಶ್ನೆಗೆ ಉತ್ತರಿಸುವುದು ಕಷ್ಟವಾಗಬಹುದು. 

ವಲಸೆ ಎನ್ನುವುದು ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಿದೆ, ನಿರ್ಲಕ್ಷಿಸಿದರೆ ಅದು ಬೆಂಕಿಯಾಗಿ ಹೊತ್ತಿಕೊಳ್ಳುವ ಅಪಾಯ ಇದೆ.

ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ August 13, 2012


ಮಳೆ ನಿಂತರೂ ಒಂದಷ್ಟು ಹೊತ್ತು ಮಳೆಹನಿ ನಿಲ್ಲುವುದಿಲ್ಲ. ಅಣ್ಣಾ ತಂಡವನ್ನು ಬರ್ಖಾಸ್ತುಗೊಳಿಸಲಾಗಿದ್ದರೂ ಅದು ಪ್ರಾರಂಭಿಸಿದ್ದ ಚಳವಳಿ ಬಗ್ಗೆ ಚರ್ಚೆ-ವಿಶ್ಲೇಷಣೆಗಳು ನಿಂತಿಲ್ಲ, ಇದು ಇನ್ನಷ್ಟು ಕಾಲ ಮುಂದುವರಿಯಲಿದೆ.

ಮಿಂಚಿಮರೆಯಾಗಿ ಹೋದ ಈ ಚಳವಳಿಯ ಗರ್ಭಪಾತಕ್ಕೆ ಕಾರಣರಾದ ಖಳನಾಯಕರು ಯಾರು ಎನ್ನುವುದನ್ನು ಗುರುತಿಸುವ ಕೆಲಸ ಈಗ ಪ್ರಾರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಎಲ್ಲರೂ ಅಣ್ಣಾತಂಡದ ಪ್ರಮುಖ ಸದಸ್ಯರಾದ ಅರವಿಂದ್ ಕೇಜ್ರಿವಾಲ್, ಕಿರಣ್‌ಬೇಡಿ ಮತ್ತು ಪ್ರಶಾಂತ್ ಭೂಷಣ್ ಮೇಲೆ ಎರಗಿಬಿದ್ದಿದ್ದಾರೆ.

`ಸೃಷ್ಟಿ, ಪಾಲನೆ ಮತ್ತು ಲಯ`ದ ಮೂರೂ ಕೆಲಸಗಳನ್ನು ಈ ತ್ರಿಮೂರ್ತಿಗಳೇ ಮಾಡಿದ್ದು ಎಂದು ಅಣ್ಣಾಬೆಂಬಲಿಗರು ಆರೋಪಿಸತೊಡಗಿದ್ದಾರೆ. ಚಳವಳಿ ಹಾದಿ ತಪ್ಪಲು ಕಾರಣವಾದ ಇವರ ಪಾತ್ರ  ಕ್ಷಮಿಸಿ ಬಿಡುವಂತಹದ್ದು ಖಂಡಿತ ಅಲ್ಲ.

ಆದರೆ ಇವರಷ್ಟೇ ಖಳನಾಯಕರೇ? ಹಾಗೆಂದು ತೀರಾ ಸರಳವಾಗಿ ತೀರ್ಮಾನಿಸಿಬಿಟ್ಟರೆ ಈ ಚಳವಳಿಯ ಸೋಲು-ಗೆಲುವುಗಳನ್ನು ವಸ್ತುನಿಷ್ಠವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಾರದು.

ಈ ತ್ರಿಮೂರ್ತಿಗಳಷ್ಟೇ ಖಳರು ಅಲ್ಲದೆ ಇದ್ದರೆ ಬೇರೆ ಯಾರು ? ಕೆಲವರು ಅಣ್ಣಾಹಜಾರೆಯವರನ್ನೇ ಹೆಸರಿಸುತ್ತಾರೆ. ಸ್ವಲ್ಪ ಮಟ್ಟಿಗೆ ಇದು ನಿಜ ಕೂಡಾ. ಹಜಾರೆ ಅವರು ಸಜ್ಜನ, ಪ್ರಾಮಾಣಿಕ, ನಿಸ್ವಾರ್ಥಿ, ಸರಳಜೀವಿ ಎನ್ನುವುದರ ಬಗ್ಗೆ ಬಹಳ ಮಂದಿಗೆ ಅನುಮಾನ ಇಲ್ಲ.

ಆದರೆ ಈ ಗುಣಗಳಿಂದಷ್ಟೇ ನಾಯಕನಾಗಲು ಸಾಧ್ಯವೇ ಎನ್ನುವುದು ಪ್ರಶ್ನೆ. ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ನಂತರದಲ್ಲಿ ನಡೆದ ಎರಡು ಪ್ರಮುಖ ಚಳವಳಿಗಳನ್ನು ಮುನ್ನಡೆಸಿದ್ದ ಗಾಂಧೀಜಿ ಮತ್ತು ಜಯಪ್ರಕಾಶ್ ನಾರಾಯಣ್ ಕೇವಲ ಸಜ್ಜನರು ಮತ್ತು ಪ್ರಾಮಾಣಿಕರಾಗಿರಲಿಲ್ಲ.

ಅವರು ಬುದ್ದಿವಂತರೂ ಆಗಿದ್ದರು.  ವಿಸ್ತಾರವಾದ ಓದು, ರಾಷ್ಟ್ರ-ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಅರಿವು, ಪ್ರವಾಸ ಮತ್ತು ಜನರ ಜತೆಗಿನ ಒಡನಾಟ ಅವರಿಗೆ ಜನರ ನಾಡಿಮಿಡಿತವನ್ನು ಅರ್ಥಮಾಡಿಕೊಳ್ಳುವ ತೀಕ್ಷ್ಣಗ್ರಹಣಶಕ್ತಿಯನ್ನು ತಂದು ಕೊಟ್ಟಿತ್ತು.  ಒಂದು ಅನ್ನದ ಅಗುಳನ್ನು ಮುಟ್ಟಿಯೇ ಪಾತ್ರೆಯಲ್ಲಿದ್ದ ಅನ್ನ ಬೆಂದಿದೆಯೇ ಇಲ್ಲವೇ ಎನ್ನುವುದನ್ನು ಹೇಳುವಷ್ಟು ಸಮಾಜದ ನಾಡಿಮಿಡಿತವನ್ನ್ನು ಬಲ್ಲವರಾಗಿದ್ದರು.

ಜನಪ್ರಿಯತೆಯಲ್ಲಿ ತೇಲಿಹೋಗದೆ ಅದನ್ನು ತಮ್ಮ ಉದ್ದೇಶ ಸಾಧನೆಗೆ ಬಳಸಿಕೊಳ್ಳುವ ನಿರ್ವಹಣಾ ಶಕ್ತಿ ಮತ್ತು ಸಂಯಮ ಅವರಲ್ಲಿತ್ತು. ಜಾತಿ,ಧರ್ಮ,ಪ್ರದೇಶಗಳಲ್ಲಿ ಒಳಗಿಂದೊಳಗೆ ಒಡೆದುಹೋಗಿರುವ ದೇಶದಲ್ಲಿ ಒಂದು ಸಾಮೂಹಿಕ ಚಳವಳಿಯನ್ನು ಮುನ್ನಡೆಸಿಕೊಂಡು ಹೋಗಲು ಇಂತಹ ಸಾಮರ್ಥ್ಯಬೇಕಾಗುತ್ತದೆ. ಈ ಗುಣಗಳು ಅಣ್ಣಾಹಜಾರೆಯವರಲ್ಲಿ ಇದ್ದಿದ್ದರೆ ಭ್ರಷ್ಟಾಚಾರ ವಿರೋಧಿ ಚಳವಳಿ ನಡುಹಾದಿಯಲ್ಲಿಯೇ ಅಪಘಾತಕ್ಕೆ ಈಡಾಗುತ್ತಿರಲಿಲ್ಲ.

ಅಣ್ಣಾಚಳವಳಿ ಹಾದಿ ತಪ್ಪಲು ಮಾಧ್ಯಮರಂಗ ವಹಿಸಿದ ಖಳನಾಯಕನ ಪಾತ್ರವೇ ಕಾರಣ ಎನ್ನುವವರೂ ಇದ್ದಾರೆ. ಈ ಆರೋಪವನ್ನು ಮಾಡುವ ಅಣ್ಣಾತಂಡದ ಸದಸ್ಯರು ಮತ್ತು  ಬೆಂಬಲಿಗರು  ಕೊನೆದಿನಗಳಲ್ಲಿ ಮಾಧ್ಯಮಗಳ ನಿರ್ಲಕ್ಷ್ಯ ಮತ್ತು ಟೀಕೆಗಳನ್ನು ಉದಹರಿಸುತ್ತಿದ್ದಾರೆ.

ಇದು ಮಾಧ್ಯಮಗಳನ್ನು ಅರ್ಥಮಾಡಿಕೊಳ್ಳಲಾಗದ ಅವರ ಅಜ್ಞಾನವನ್ನಷ್ಟೇ ತೋರಿಸುತ್ತದೆ. ಕೊನೆದಿನಗಳ ನಿರ್ಲಕ್ಷ್ಯಗಿಂತಲೂ  ಅಣ್ಣಾಚಳವಳಿಗೆ ಹೆಚ್ಚು ಹಾನಿ ಉಂಟು ಮಾಡಿದ್ದು ಪ್ರಾರಂಭದ ದಿನಗಳ ಅತಿಪ್ರಚಾರ.

ಕಣ್ಣುಕಟ್ಟಿನ ಪ್ರಚಾರ ವೈಖರಿ ಮೂಲಕ ಉಪವಾಸ ಶಿಬಿರದ ಮುಂದೆ ಸೇರಿದ್ದ ಸಾವಿರ ಜನರನ್ನು  ಲಕ್ಷವಾಗಿ, ಲಕ್ಷ ಜನರನ್ನು ಕೋಟಿಯಾಗಿ ಮಾಧ್ಯಮಗಳು ಬಿಂಬಿಸಿದ್ದನ್ನು ನಿಜವೆಂದೇ ನಂಬಿದ ಅಣ್ಣಾತಂಡದ ಸದಸ್ಯರು ದೇಶದ 120 ಕೋಟಿ ಜನ ತಮ್ಮ ಬೆನ್ನಹಿಂದೆ ಇದ್ದಾರೆ ಎಂದು ಭ್ರಮಿಸಿಬಿಟ್ಟರು.
 
ಮೂರೂಹೊತ್ತು ಟಿವಿ ಪರದೆಗಳಲ್ಲಿ, ಪತ್ರಿಕೆಗಳ ಪುಟಗಳಲ್ಲಿ ಕಾಣಿಸುವ ತಮ್ಮ ಮುಖಗಳನ್ನು ಪ್ರೀತಿಸುತ್ತಾ ಆತ್ಮರತಿಗೆ ಜಾರಿಬಿಟ್ಟರು. ಮಾಧ್ಯಮರಂಗ ವಾಣಿಜ್ಯೀಕರಣಗೊಂಡ ಬದಲಾದ ಪರಿಸ್ಥಿತಿಯಲ್ಲಿ ಮುಖ್ಯವಾಗಿ ಟಿವಿ ಚಾನೆಲ್‌ಗಳು ಹುಟ್ಟು-ಸಾವುಗಳೆರಡನ್ನು ಸಂಭ್ರಮದಿಂದ ಆಚರಿಸುತ್ತದೆ.

ಈ ಭರದಲ್ಲಿ ಸರಿ-ತಪ್ಪು ಇಲ್ಲವೆ ಒಳ್ಳೆಯದು-ಕೆಟ್ಟದನ್ನು ಗುರುತಿಸುವ ನ್ಯಾಯಪ್ರಜ್ಞೆ ಜನಪ್ರಿಯತೆಯ ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುತ್ತದೆ. ಮಾಧ್ಯಮಗಳಿಂದ ಪ್ರಚಾರ ಬಯಸುವವರಿಗೆ ಇದನ್ನು ಅರ್ಥಮಾಡಿಕೊಳ್ಳುವ ಶಕ್ತಿ ಇಲ್ಲದೆ ಇದ್ದರೆ ಅಣ್ಣಾತಂಡಕ್ಕಾದ ಗತಿಯೇ ಆಗುತ್ತದೆ.

ಮಾಧ್ಯಮಗಳ ಪ್ರಚಾರದ ಊರುಗೋಲಿನ ಬಲದಿಂದ ಎದ್ದುನಿಂತದ್ದು, ಆ ಊರುಗೋಲನ್ನು ಕಿತ್ತುಕೊಂಡ ಕೂಡಲೇ ಕುಸಿದುಬೀಳುತ್ತದೆ. ಹಾಗೆಯೇ ಆಯಿತು.

ಇವರೆಲ್ಲರ ಬಗ್ಗೆ ಚರ್ಚಿಸುತ್ತಿರುವ ಸಂದರ್ಭದಲ್ಲಿ ಅಣ್ಣಾಚಳವಳಿಯ ವೈಫಲ್ಯದಲ್ಲಿ ಖಳನಾಯಕರ ಪಾತ್ರವಹಿಸಿದ್ದ ಬಹುಮುಖ್ಯವಾದ ಸಮುದಾಯವನ್ನು ಎಲ್ಲರೂ ಮರೆತುಬಿಟ್ಟಿದ್ದಾರೆ. ಅದು ಚಳವಳಿಗೆ ಸೇರುತ್ತಿದ್ದ ಜನ. ಜಯಪ್ರಕಾಶ್ ನಾರಾಯಣ್ ನೇತೃತ್ವದ `ಸಂಪೂರ್ಣ ಕ್ರಾಂತಿ`ಯ ನಂತರದ ದಿನಗಳಲ್ಲಿ ಒಂದು ಚಳವಳಿಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಜನ ಎಂದೂ ಭಾಗವಹಿಸಿರಲಿಲ್ಲ.

`ನಾನೇ ಅಣ್ಣಾ` ಎಂದು ತಲೆಪಟ್ಟಿ ಕಟ್ಟಿಕೊಂಡು, ಎದೆಮೇಲೆ ಬರೆಸಿಕೊಂಡು, ಹಗಲುಹೊತ್ತಿನಲ್ಲಿ ಘೋಷಣೆ ಕೂಗುತ್ತಾ, ರಾತ್ರಿಹೊತ್ತು ಕ್ಯಾಂಡಲ್ ಹಚ್ಚುತ್ತಾ ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಕ್ರೀಯಾಶೀಲರಾಗಿ `ಅರಬ್ ವಸಂತ` ಇನ್ನೇನು ಭಾರತದಲ್ಲಿ ಪ್ರಾರಂಭವಾಗಿಯೇ ಬಿಟ್ಟಿತೆನ್ನುವ ಭ್ರಮಾಲೋಕವನ್ನು ಸೃಷ್ಟಿಸುತ್ತಿದ್ದವರು ಚಳವಳಿಯಲ್ಲಿ ಭಾಗವಹಿಸಿದ್ದ ಜನ.

ಅಣ್ಣಾಹಜಾರೆ ಅವರ ಮೊದಲೆರಡು ಉಪವಾಸಗಳ ಕಾಲದಲ್ಲಿ ಸಕ್ರಿಯವಾಗಿದ್ದ ಈ ಜನಸಮೂಹ ನಂತರದ ಎರಡು ಉಪವಾಸಗಳ ಕಾಲಕ್ಕೆ ಆಸಕ್ತಿಯನ್ನು ಕಳೆದುಕೊಂಡುಬಿಟ್ಟಿತು.

ಹಿಂದಿನಷ್ಟು ಜನ ಸೇರುತ್ತಿಲ್ಲ ಎಂದು ಗೊತ್ತಾದ ಕೂಡಲೇ ಆಡಳಿತಾರೂಢ ಪಕ್ಷ ಚಳವಳಿಗಾರರನ್ನು ಕರೆಸಿ ಮಾತನಾಡಲು ಕೂಡಾ ಹೋಗದೆ ಸುಮ್ಮನಾಯಿತು, ಜನ ಕಡಿಮೆ ಸೇರುತ್ತಿದ್ದಾರೆ ಎಂದು ಗೊತ್ತಾದ ಕೂಡಲೇ ಮಾಧ್ಯಮಗಳು ಕೂಡಾ ಹಿಂದೆ ಸರಿದುಬಿಟ್ಟವು. ಅಣ್ಣಾತಂಡ ಯುದ್ಧಮುಗಿಯವ ಮೊದಲೇ ಶಸ್ತ್ರತ್ಯಾಗ ಮಾಡಲು ಮುಖ್ಯ ಕಾರಣ ತಮ್ಮ ಹಿಂದೆ ಲಕ್ಷಲಕ್ಷ ಸಂಖ್ಯೆಯಲ್ಲಿದ್ದೇವೆ ಎಂಬ ನಂಬಿಕೆ ಹುಟ್ಟಿಸಿದ್ದ ಜನ ದೂರವಾಗಿದ್ದು.

ಈ ಜನ ಹೀಗೆ ಯಾಕೆ ವರ್ತಿಸಿದರು ಎನ್ನುವುದನ್ನು ವಿಶ್ಲೇಷಿಸುವ ಮೊದಲು ಇವರು ಯಾರು ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ನಮ್ಮಲ್ಲಿ ನಡೆಯುವ ಚಳವಳಿಗಳನ್ನು ಒಂದು ನಿರ್ದಿಷ್ಟವಾದ ಆವರಣದೊಳಗೆ ಸೇರಿಸುವುದು ಕಷ್ಟವಾದರೂ ಸ್ಥೂಲವಾಗಿ ಇವುಗಳನ್ನು ರಾಜಕೀಯ ಮತ್ತು ರಾಜಕೀಯೇತರ  ಎಂದು ಗುರುತಿಸಬಹುದು.

ಈ ವ್ಯಾಖ್ಯಾನ ಕೂಡಾ ಚಳವಳಿಗಳ ಸ್ಪಷ್ಟ ಚಿತ್ರವನ್ನು ನೀಡುವುದಿಲ್ಲ. ರಾಜಕೀಯ ಉದ್ದೇಶದ ಚಳವಳಿಗಳ ಬಗ್ಗೆ ಯಾವುದೇ ಗೊಂದಲ ಇಲ್ಲ. ಉದಾಹರಣೆಗೆ ಕಾಂಗ್ರೆಸ್,ಬಿಜೆಪಿ, ಕಮ್ಯುನಿಸ್ಟ್ ಇತ್ಯಾದಿ ಪಕ್ಷಗಳು ನಡೆಸುವ ಚಳವಳಿಗಳು.

ಇಲ್ಲಿ ಎಲ್ಲವೂ ಪಾರದರ್ಶಕ. ಸಮಸ್ಯೆ ರಾಜಕೀಯೇತರ ಚಳವಳಿಗಳದ್ದು. ನಿರ್ದಿಷ್ಟವಾದ ರಾಜಕೀಯ ಸಿದ್ಧಾಂತವನ್ನು ಹೊಂದಿಯೂ ಚುನಾವಣಾ ರಾಜಕೀಯದಿಂದ ದೂರವಾಗಿರುವ ರಾಜಕೀಯೇತರ ಚಳವಳಿಗಳಿವೆ.

ಇದೇ ರೀತಿ  ರಾಜಕೀಯೇತರ ಚಳವಳಿಗಳಾಗಿ ಪ್ರಾರಂಭಗೊಂಡು ಕ್ರಮೇಣ ನೇರ ಚುನಾವಣೆಯಲ್ಲಿ ಪಾಲ್ಗೊಂಡ ಚಳವಳಿಗಳೂ ಇವೆ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕವೂ ಸೇರಿದಂತೆ ದೇಶದ ಬೇರೆಬೇರೆ ಭಾಗಗಳಲ್ಲಿನ ರೈತ ಮತ್ತು ದಲಿತ ಚಳವಳಿಗಳು. ರಾಜಕೀಯ ಚಳವಳಿಗಳಲ್ಲಿ ಭಾಗವಹಿಸಿದವರು ಒಂದು ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿರುವವರು.

ರಾಜಕೀಯೇತರ ಚಳವಳಿಗೆ ವಿಶಾಲವಾದ ಹರಹು ಇರುತ್ತದೆ. ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಇಲ್ಲವೆ ಭೂಮಿ ಕಳೆದುಕೊಂಡವರು, ಮನೆ ಕಳೆದುಕೊಂಡವರು,ಅನ್ಯಾಯಕ್ಕೀಡಾದವರು...

ಹೀಗೆ ಬೇರೆಬೇರೆ ಜನವರ್ಗವನ್ನು ನಿರ್ದಿಷ್ಟವಾಗಿ ಗುರಿಯಾಗಿಟ್ಟುಕೊಂಡು ಈ ಚಳವಳಿಗಳು ನಡೆಯುತ್ತಿರುತ್ತವೆ. ಈ ಎರಡೂ ಬಗೆಯ ಚಳವಳಿಗಳಿಗೆ ಸ್ಪಷ್ಟವಾದ ಐಡೆಂಟಿಟಿ ಇರುತ್ತದೆ. ಇದರಿಂದಾಗಿ ಚಳವಳಿಯ ನಾಯಕರಿಗೆ ಕೂಡಾ ತಮ್ಮ ಉದ್ದೇಶ ಮತ್ತು ಸಾಗುವ ದಾರಿಯ ಬಗ್ಗೆ ಸ್ಪಷ್ಟತೆ ಇರುತ್ತದೆ.

 ಆದರೆ ಬಹಳ ದೊಡ್ಡ ಕ್ಯಾನ್‌ವಾಸ್ ಇಟ್ಟುಕೊಂಡು ಪ್ರಾರಂಭವಾದ ಅಣ್ಣಾಚಳವಳಿಗೆ ಒಂದು ನಿರ್ದಿಷ್ಟ ಐಡೆಂಟಿಟಿ ಇರಲಿಲ್ಲ. ಇದು ಈ ಚಳವಳಿಯ ಶಕ್ತಿಯೂ ಹೌದು, ದೌರ್ಬಲ್ಯ ಕೂಡಾ. ಯಾವುದೇ ರಾಜಕೀಯ ಪಕ್ಷದ ಜತೆಗೆ ಗುರುತಿಸಿಕೊಳ್ಳದವರು ಮಾತ್ರವಲ್ಲ, ಗುರುತಿಸಿಕೊಂಡವರು ಕೂಡಾ ಎದೆಮೇಲಿದ್ದ ಪಕ್ಷದ ಬ್ಯಾಡ್ಜ್‌ಗಳನ್ನು ಕಿಸೆಯಲ್ಲಿಟ್ಟುಕೊಂಡು ಅಣ್ಣಾಬ್ಯಾಡ್ಜ್ ಧರಿಸಿ ಉಪವಾಸ ಕೂತಿದ್ದರು.

ಭ್ರಷ್ಟಾಚಾರ ಎನ್ನುವುದು ಈ ದೇಶದ ಬಡವನಿಂದ ಹಿಡಿದು ಶ್ರಿಮಂತರವರೆಗೆ, ಅಶಿಕ್ಷಿತರಿಂದ ಹಿಡಿದು ಶಿಕ್ಷಿತರವರೆಗೆ ಎಲ್ಲರನ್ನೂ ಆವರಿಸಿರುವ ಸಮಸ್ಯೆಯಾಗಿರುವ ಕಾರಣ ನಮ್ಮ ಗುರಿ ದೇಶದ 120 ಕೋಟಿ ಜನ ಎಂದು ಅಣ್ಣಾತಂಡ ತಿಳಿದುಕೊಂಡುಬಿಟ್ಟಿತು.

ತಂಡದ ಸದಸ್ಯರು ಎಲ್ಲರನ್ನೂ ಬನ್ನಿಬನ್ನಿ ಎಂದು ಕೈಬೀಸಿ ಕರೆಯಲಾರಂಭಿಸಿದರು. ಹೀಗೆ ಬಂದವರಲ್ಲಿ ಬಹುಸಂಖ್ಯಾತರು ಮಧ್ಯಮವರ್ಗಕ್ಕೆ ಸೇರಿರುವ ನಗರ ಕೇಂದ್ರಿತ, ಉದ್ಯೋಗಸ್ಥ, ಸದಾ ಸುರಕ್ಷತೆಯ ಕಕ್ಷೆಯೊಳಗೆ ಇರಬೇಕೆಂದು ಬಯಸುವ ಮತ್ತು ಯಾವುದೇ ಚಳವಳಿಯಲ್ಲಿ ಭಾಗವವಹಿಸಿ ಕಷ್ಟ-ನಷ್ಟ ಅನುಭವಿಸದವರು.

ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಹುಟ್ಟಿದ ಮತ್ತು ಆರ್ಥಿಕ ಉದಾರೀಕರಣದ ಯುಗದಲ್ಲಿ ಕಣ್ಣುಬಿಟ್ಟ 25-35 ವಯಸ್ಸಿನ ಆಜುಬಾಜಿನ ಈ ಯುವವರ್ಗ  ಲಾಭ-ನಷ್ಟದ ಲೆಕ್ಕಾಚಾರ ಇಟ್ಟುಕೊಂಡೇ ಮುಂದೆ ಹೆಜ್ಜೆ ಇಡುವವರು. `ಸೋಡಾಗ್ಯಾಸ್` ರೀತಿ ಒಮ್ಮೆಲೇ ಚಿಮ್ಮಿದ ಈ `ಯುವಬೆಂಬಲ`ವನ್ನು ಅಣ್ಣಾತಂಡ ನಂಬಿತು.ನಂಬಿಕೆ ಕೈಕೊಟ್ಟಿತು.

 ಈ ಮಧ್ಯಮ ವರ್ಗ ಭಾರತದಲ್ಲಿ ಮಾತ್ರವಲ್ಲ ಪ್ರಪಂಚದ ಯಾವುದೇ ದೇಶದಲ್ಲಿ ರಾಜಕೀಯ ಇಲ್ಲವೆ ಸಾಮಾಜಿಕ ಬದಲಾವಣೆಯಲ್ಲಿ ಭಾಗವಹಿಸಿಲ್ಲ. ಇದನ್ನು ಹೇಳಿದಾಗ ಕೆಲವರು ಅರಬ್‌ರಾಷ್ಟ್ರಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಉದಾಹರಣೆ ಕೊಡಬಹುದು. ಅಲ್ಲಿನ ಮಧ್ಯಮವರ್ಗದಿಂದಲೇ ಚಳವಳಿ ಪ್ರಾರಂಭವಾದರೂ ಅದು ಅನ್ಯಾಯಕ್ಕೀಡಾದ ಎಲ್ಲ ವರ್ಗಗಳನ್ನು ಜತೆಯಲ್ಲಿ ಕಟ್ಟಿಕೊಂಡು ಬೆಳೆಯುತ್ತಾಹೋಯಿತು.

ಆ ದೇಶಗಳಲ್ಲಿ ಸರ್ವಾಧಿಕಾರದಿಂದ ನಲುಗಿಹೋದ ಸಾಮಾನ್ಯ ಜನ ಅದರಲ್ಲಿ ಭಾಗವಹಿಸಿದ್ದರು. ಪ್ರಾಣವೊಂದನ್ನು ಬಿಟ್ಟು ಕಳೆದುಕೊಳ್ಳಲು ಬೇರೆ ಏನೂ ಇಲ್ಲದವರು ಅವರು. ಇಲ್ಲಿ ಹಾಗಾಗಲಿಲ್ಲ. ಅಣ್ಣಾಚಳವಳಿ ಎತ್ತಿದ ಭ್ರಷ್ಟಾಚಾರದ ವಿಷಯ ಎಲ್ಲರಿಗೆ ಸಂಬಂಧಿಸಿದ್ದೇ ಆಗಿದ್ದರೂ ಅದರ ತೀವ್ರತೆಯ ಅನುಭವ ಬೇರೆಬೇರೆ ವರ್ಗದ ಜನರಿಗೆ ಬೇರೆಬೇರೆ ರೀತಿಯದಾಗಿದೆ.

ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎನ್ನುವ ರೈತ, ಹೆಚ್ಚು ಸಂಬಳ ಸಿಗುತ್ತಿಲ್ಲ ಎನ್ನುವ ಕಾರ್ಮಿಕ, ಲಿಂಗತಾರತಮ್ಯ  ನಡೆಯುತ್ತಿದೆ ಎನ್ನುವ ಮಹಿಳೆ, ಜಾತಿತಾರತಮ್ಯದಿಂದಾಗಿ ದೌರ್ಜನ್ಯ ನಡೆಯುತ್ತಿದೆ ಎನ್ನುವ ದಲಿತರು, ಉದ್ಯೋಗ ಸಿಗುತ್ತಿಲ್ಲ ಎನ್ನುವ ಯುವಕರು..ಹೀಗೆ ಸಮಸ್ಯೆಗಳು ಹತ್ತಾರು.

ಇವರ ಕಷ್ಟಗಳ ಪಟ್ಟಿಯಲ್ಲಿ ಭ್ರಷ್ಟಾಚಾರ  ಇದ್ದರೂ ಅದು ಮೊದಲ ಸ್ಥಾನದಲ್ಲಿ ಇಲ್ಲ. ಭ್ರಷ್ಟಾಚಾರ ನಿರ್ಮೂಲನೆ ಇವರ ಕಷ್ಟಪರಿಹಾರಕ್ಕೆ ನೆರವಾಗಲೂಬಹುದು. ಆದರೆ ಇದನ್ನು ಯಾರೂ ಅವರಿಗೆ ಮನವರಿಕೆ ಮಾಡಿಕೊಟ್ಟಿಲ್ಲ.

ಆದುದರಿಂದ ಅವರಲ್ಲಿ ಹೆಚ್ಚಿನ ಮಂದಿ ಭ್ರಷ್ಟಾಚಾರ ವಿರೋಧಿ ಚಳವಳಿಯಿಂದ ದೂರವೇ ಉಳಿದುಬಿಟ್ಟರು. ಅವರನ್ನು ಹತ್ತಿರಕ್ಕೆ ಕರೆದುಕೊಂಡು ಬರುವ ಪ್ರಯತ್ನವನ್ನೂ ಯಾರೂ ಮಾಡಲಿಲ್ಲ. ಈ ಕಾರಣದಿಂದಾಗಿಯೇ ಜನಲೋಕಪಾಲರ ನೇಮಕಕ್ಕಾಗಿ ನಡೆದ ಹೋರಾಟ ನಿಜವಾದ ಅರ್ಥದಲ್ಲಿ ಜನಚಳವಳಿ ಆಗಲೇ ಇಲ್ಲ.

ಅಣ್ಣಾಚಳವಳಿ ವಿಫಲಗೊಂಡ ಮಾತ್ರಕ್ಕೆ ಮುಂದಿನ ಎಲ್ಲ ದಾರಿಗಳು ಮುಚ್ಚಿಹೋಗಿವೆ ಎಂದರ್ಥ ಅಲ್ಲ. ರಾಷ್ಟ್ರೀಯ ಪಕ್ಷಗಳು ನಿಧಾನವಾಗಿ ಮರೆಗೆ ಸರಿದು ಪ್ರಾದೇಶಿಕ ಪಕ್ಷಗಳು ವಿಜೃಂಭಿಸುತ್ತಿರುವ ಈಗಿನ ರಾಜಕಾರಣದಿಂದಲೂ ಚಳವಳಿಗಾರರೂ ಕಲಿಯಬೇಕಾದ ಪಾಠ ಇದೆ.

ಬಹುಶಃ ರಾಷ್ಟ್ರಮಟ್ಟದ ಒಂದು ಚಳವಳಿಯನ್ನು ಇನ್ನುಮುಂದೆ ನಡೆಸಿಕೊಂಡು ಹೋಗುವುದು ಸಾಧ್ಯ ಇಲ್ಲವೇನೋ? ಇದರಿಂದ ನಿರಾಶರಾಗಬೇಕಾಗಿಲ್ಲ, ಈಗಲೂ ದೇಶದ ನಾನಾಭಾಗಗಳಲ್ಲಿ ನೀರು,ಭೂಮಿ, ಉದ್ಯೊಗ, ಶಿಕ್ಷಣ,ಆರೋಗ್ಯ,ಆತ್ಮಗೌರವ...ಹೀಗೆ ನಾನಾ ಉದ್ದೇಶದ ಚಳವಳಿಗಳು ತಮ್ಮ ಮಿತಿಯಲ್ಲಿ ನಡೆಯುತ್ತಿರುತ್ತವೆ.

ಪ್ರಜಾಪ್ರಭುತ್ವವನ್ನು ಜೀವಂತವಾಗಿ ಮತ್ತು ಆರೋಗ್ಯಪೂರ್ಣವಾಗಿ ಇಟ್ಟಿರುವ ಈ ಸಣ್ಣಸಣ್ಣ ಚಳವಳಿಗಳೇ ಭವಿಷ್ಯದ ಭರವಸೆಗಳು. ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ.

Monday, August 6, 2012

ರಾಜಕೀಯದ ಬೋನಿಗೆ ಬಿದ್ದ `ಚಳವಳಿ ಹುಲಿ' August 06, 2012

ನಮ್ಮ ನಡುವಿನ ಭ್ರಷ್ಟರಾಜಕಾರಣಿಗಳಿಗೆ ಹೋಲಿಸಿದರೆ ಅಣ್ಣಾ ತಂಡದ ಸದಸ್ಯರು ಪ್ರಾಮಾಣಿಕರು ಮತ್ತು ಯೋಗ್ಯರು. ಅವರ ಮೇಲೆ ಕೆಲವು ಆರೋಪಗಳು ಇವೆ, ನಿಜ. ಇವೆಲ್ಲವೂ ಈ ದೇಶದ ಬಹುಸಂಖ್ಯಾತ ಪ್ರಜೆಗಳು ಒಂದಲ್ಲ ಒಂದು ಸಂದರ್ಭದಲ್ಲಿ ಬಲಿಯಾಗುವ ಸಾಮಾನ್ಯ ದೌರ್ಬಲ್ಯಗಳು. 

ಇವೆಲ್ಲದರ ಹೊರತಾಗಿಯೂ ಅಣ್ಣಾ ಹಜಾರೆ ರಾಜಕೀಯ ಪಕ್ಷ ಕಟ್ಟಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಬಹುಮತಕ್ಕೆ ಬೇಕಾಗಿರುವ 272  ಪ್ರಾಮಾಣಿಕ ಸದಸ್ಯರನ್ನು ಗೆಲ್ಲಿಸಿ ಕೇಂದ್ರದಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ರಚಿಸಲು ಸಾಧ್ಯವಾದರೆ...ಅದಕ್ಕಿಂತ ದೊಡ್ಡ ಭಾಗ್ಯ ಭಾರತೀಯರಿಗೆ ಇನ್ನೇನು ಬೇಕು? ಆದರೆ ಇದು ಸಾಧ್ಯವೇ ಎನ್ನುವುದಷ್ಟೇ ಪ್ರಶ್ನೆ.

ಹುಲಿಯಾಗಿರಲಿ, ಇಲಿಯಾಗಿರಲಿ ಯಾವುದೂ ಕೂಡಾ ತನ್ನನ್ನು ಹಿಡಿಯಲಿಕ್ಕಾಗಿಯೇ ಬೋನು ಇಟ್ಟಿದ್ದಾರೆ ಎಂದು ಗೊತ್ತಿದ್ದೂ ಅದರಲ್ಲಿ ಸಿಕ್ಕಿಹಾಕಿಕೊಳ್ಳುವುದಿಲ್ಲ. ಕ್ಷಿಪ್ರ ಅವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧದ ಜಾಗೃತಿ ಮೂಲಕ ದೇಶದಲ್ಲಿ ಸಂಚಲನ ಉಂಟುಮಾಡಿದ್ದ ಅಣ್ಣಾ ಚಳವಳಿ ಎಂಬ `ಹುಲಿ`ಯನ್ನು ರಾಜಕೀಯದ ಬೋನಿಗೆ ಹಾಕಲು ಯುಪಿಎ ಸರ್ಕಾರ ಒಂದು ವರ್ಷದಿಂದ ಸತತವಾಗಿ ಪ್ರಯತ್ನ ಮಾಡುತ್ತಿತ್ತು. 

ಇದಕ್ಕಾಗಿ `ರಾಜಕೀಯಕ್ಕೆ ಇಳಿದು ನೋಡಿ`, `ಚುನಾವಣೆಯಲ್ಲಿ ಸ್ಪರ್ಧಿಸಿ ನೋಡಿ` ಎಂದು ಕೇಂದ್ರ ಸಚಿವರು ಅಣ್ಣಾತಂಡವನ್ನು ಕೆಣಕುತ್ತಲೇ ಇದ್ದರು. ಇದರಿಂದ ಪ್ರಚೋದನೆಗೊಳಗಾದವರಂತೆ ಅಣ್ಣಾತಂಡದ ಕೆಲವು ಸದಸ್ಯರು ಹಿಸ್ಸಾರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಿ, ಹೆಚ್ಚುಕಡಿಮೆ ಬೋನಿನ ಹತ್ತಿರಹೋಗಿ ಒಳಗೆ ಬೀಳದೆ ತಪ್ಪಿಸಿಕೊಂಡಿದ್ದರು. 

ಈಗ `ಚಳವಳಿಯ ಹುಲಿ` ಬೋನಿಗೆ ಬಿದ್ದಿದೆ. ಇದರಿಂದ ಆಡಳಿತಾರೂಢ ಯುಪಿಎಗೆ ಮಾತ್ರವಲ್ಲ, ಬಹಿರಂಗವಾಗಿ ಅಣ್ಣಾ ಚಳವಳಿಯನ್ನು ಬೆಂಬಲಿಸುತ್ತಾ, ಆಂತರ್ಯದಲ್ಲಿ ಅದನ್ನು ದ್ವೇಷಿಸುತ್ತಾ ಇದ್ದ ವಿರೋಧಪಕ್ಷಗಳಿಗೂ ಖುಷಿಯಾಗಿದೆ. ಬೋನಿನಲ್ಲಿ ಬಿದ್ದಿರುವುದು ಗೊತ್ತಿಲ್ಲದಂತೆ `ಚಳವಳಿಯ ಹುಲಿ` ಮಾತ್ರ `ಭ್ರಷ್ಟ ರಾಜಕಾರಣಿಗಳ ಎದೆ ಸೀಳುತ್ತೇನೆ` ಎಂದು ಆರ್ಭಟಿಸುತ್ತಿದೆ. 

ಬೋನಿಗೆ ಬಿದ್ದಿರುವ ಹುಲಿಗೆ ಯಾರು ಹೆದರುತ್ತಾರೆ? ರಾಜಕೀಯವನ್ನು `ಫಟಿಂಗರ ಕೊನೆಯ ತಾಣ` ಎಂದು ಹೇಳುತ್ತಾ ಬಂದಿರುವ ಅಣ್ಣಾ ತಂಡ ಈಗ ಅದೇ ತಾಣವನ್ನು ಅರಸಿಕೊಂಡು ಬಂದ ಹಾಗಾಗಿದೆ. ಇನ್ನು ಮುಂದೆ ಅವರು `ಫಟಿಂಗರ` ಸಮಕ್ಕೆ ನಿಂತು ಸೆಣಸಾಡಬೇಕಾಗಿದೆ.

ರಾಜಕೀಯ ಪಕ್ಷವಾಗಿ ನೋಂದಣಿ ಮಾಡಿಕೊಂಡ ದಿನದಿಂದಲೇ ಅಣ್ಣಾ ತಂಡ ತನ್ನ ಮೊದಲ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಅಣ್ಣಾತಂಡ ದೇಶದ ಜನತೆಯ ಕಣ್ಣಮುಂದೆ ಮೂಡಿಸಿರುವ `ಆದರ್ಶ ಸ್ವರೂಪಿ ರಾಜಕೀಯ ಪಕ್ಷ`ವನ್ನು ನಿರ್ವಹಿಸಲು ನಿಸ್ವಾರ್ಥ, ಪ್ರಾಮಾಣಿಕ ಮತ್ತು ಸೇವಾನಿಷ್ಠ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಬೇಕಾಗುತ್ತಾರೆ. 

ಈ ಕೆಲಸಕ್ಕಾಗಿ ಅಣ್ಣಾ ಹಜಾರೆಯವರ ರೀತಿಯಲ್ಲಿಯೇ ಚುನಾವಣೆಯಲ್ಲಿ ಸ್ಪರ್ಧಿಸದೆ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಎಷ್ಟು ಮಂದಿ ಮುಂದೆ ಬರಬಹುದು? ದೇಶಪ್ರೇಮ ಸಾಬೀತುಪಡಿಸಲು ವಾರಾಂತ್ಯದ ರಜೆಯ ಕಾಲದಲ್ಲಿ ಉಪವಾಸ ಸತ್ಯಾಗ್ರಹದ ಶಿಬಿರಕ್ಕೆ ಬಂದು ಜೈಕಾರ ಹಾಕಿದರೆ ಸಾಕು ಎಂದು ತಿಳಿದುಕೊಂಡವರು ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟು `ದೇಶಸೇವೆ`ಗೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆಯೇ? ರಾಜಕೀಯ ಪಕ್ಷವೆಂದರೆ ಹನ್ನೊಂದು ಮಂದಿಯ ಕ್ರಿಕೆಟ್ ತಂಡ ಅಲ್ಲ, ಬೀದಿಯಲ್ಲಿದ್ದವರೆನ್ನೆಲ್ಲ ಸೇರಿಸಿಕೊಳ್ಳುವ ಗಣೇಶೋತ್ಸವ ಸಮಿತಿಯೂ ಅಲ್ಲ. 

ಅದರಲ್ಲಿ ಎಲ್ಲ ಜಾತಿ, ಧರ್ಮ, ವರ್ಗ ಮತ್ತು ಪ್ರದೇಶಗಳಿಗೆ ಪ್ರಾತಿನಿಧ್ಯ ಇರಬೇಕಾಗುತ್ತದೆ. ಪ್ರಾತಿನಿಧ್ಯ ಎಂದರೆ ಮೀಸಲಾತಿ ಅಲ್ಲ, ಅದು ಸಮಾನ ಅವಕಾಶ. ಇಂತಹ ಪ್ರಾತಿನಿಧ್ಯ ಅಣ್ಣಾತಂಡದಲ್ಲಿ ಇಲ್ಲ ಎನ್ನುವುದು ಕೂಡಾ ಅದರ ವಿರುದ್ಧದ ಒಂದು ಆರೋಪ.

ಅಣ್ಣಾತಂಡದ ಎರಡನೆಯ ಪರೀಕ್ಷೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಎದುರಾಗಲಿದೆ. ಸಂಸತ್‌ನೊಳಗೆ ಕಾಲಿಡುವ ಸದಸ್ಯರ ಅರ್ಹತೆ ಮತ್ತು ಪ್ರಾಮಾಣಿಕತೆ ಬಗ್ಗೆ ಅಣ್ಣಾ ತಂಡ ಕಳೆದ ಒಂದು ವರ್ಷದ ಅವಧಿಯಲ್ಲಿ  ಸಾರ್ವಜನಿಕ ವೇದಿಕೆ ಮತ್ತು ಟಿವಿ ಸ್ಟುಡಿಯೋಗಳಲ್ಲಿ ಗಂಟೆಗಟ್ಟಲೆ ಭಾಷಣ ಬಿಗಿದಿದೆ. 

ಆಡಿದ್ದನ್ನು ಮಾಡಿತೋರಿಸಬೇಕಾದರೆ ಅವರು ಈಗ `22 ಕ್ಯಾರೆಟ್` ಶುದ್ಧದ 543 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಣ್ಣಾಹಜಾರೆ ಅವರಿಗೆ ಚಳವಳಿ ಕಾಲದಲ್ಲಿ ತನ್ನ ಅಕ್ಕಪಕ್ಕದಲ್ಲಿ ನಿಲ್ಲಿಸಿಕೊಳ್ಳಲು ಸರಿಯಾಗಿ ನಾಲ್ಕು ಪ್ರಾಮಾಣಿಕ ಕಾರ್ಯಕರ್ತರು ಸಿಕ್ಕಿಲ್ಲ.
 
ಈಗ ಇದ್ದವರ ಮೇಲೆಯೂ ಆರೋಪಗಳಿರುವಾಗ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎಲ್ಲಿಂದ ತರುತ್ತೀರಿ? ಅಂತಹವರನ್ನು ಸೃಷ್ಟಿ ಮಾಡಲು ಅಣ್ಣಾಹಜಾರೆ `ಬ್ರಹ್ಮ`ನೂ ಅಲ್ಲ, ಹೊರಗಿನಿಂದ ಆಮದು ಮಾಡಿಕೊಳ್ಳಲು ಅವರು ಸರಕೂ ಅಲ್ಲ. ಅಣ್ಣಾತಂಡ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಯ ಮಟ್ಟವನ್ನು ಹಿಮಾಲಯದ ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿರುವ ಕಾರಣ, ನಾಳೆ  ಮಾಧ್ಯಮದವರು ಸೇರಿದಂತೆ ಸಾರ್ವಜನಿಕರು ದುರ್ಬೀನು ಹಿಡಿದುಕೊಂಡು ಅಣ್ಣಾ ಪಕ್ಷದವರ ಜಾತಕ ಜಾಲಾಡಿಸುತ್ತಾರೆ.

ಮೂರನೆಯ ಪರೀಕ್ಷೆಯನ್ನು ಚುನಾವಣೆಯ ಖರ್ಚಿಗೆ ದುಡ್ಡು ಹೊಂದಿಸಿಕೊಳ್ಳಬೇಕಾದ ಸಂದರ್ಭದಲ್ಲಿ ಅಣ್ಣಾತಂಡ ಎದುರಿಸಬೇಕಾಗುತ್ತದೆ.  ಆಯೋಗದ ನಿಯಮದ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿ 25 ಲಕ್ಷ ರೂಪಾಯಿ ಮತ್ತು ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿ 10 ಲಕ್ಷ ರೂಪಾಯಿಗಿಂತ ಹೆಚ್ಚು ಹಣ ಖರ್ಚು ಮಾಡುವ ಹಾಗಿಲ್ಲ. 

ಕಳೆದ 25 ವರ್ಷಗಳಲ್ಲಿ ಯಾವುದಾದರೂ ಅಭ್ಯರ್ಥಿ ಈ ಮಿತಿಯೊಳಗೆ ಹಣ ಖರ್ಚು ಮಾಡಿ ಗೆದ್ದ ಉದಾಹರಣೆಗಳು ಇವೆಯೇ? ಕ್ರೂರ ವಾಸ್ತವವನ್ನು ಒಪ್ಪಿಕೊಂಡು ಅಣ್ಣಾಪಕ್ಷದ ಅಭ್ಯರ್ಥಿಗಳು  ಆಯೋಗ ವಿಧಿಸಿರುವ ಮಿತಿಯನ್ನು ಮೀರಿ ಖರ್ಚು ಮಾಡಿದರೆ ಈಗ ಭ್ರಷ್ಟಾಚಾರದ ಕೆಸರಲ್ಲಿ ಮುಳುಗಿರುವ ರಾಜಕಾರಣಿಗಳಿಗೂ ಇವರಿಗೂ ಏನು ವ್ಯತ್ಯಾಸ ಉಳಿಯಲಿದೆ? 

ನಾಲ್ಕನೆಯ ಪರೀಕ್ಷೆ ಎದುರಾಗಲಿರುವುದು ರಾಜಕೀಯ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಸಂದರ್ಭದಲ್ಲಿ. ಇಲ್ಲಿಯವರೆಗೆ ಅಣ್ಣಾತಂಡದ ಏಕೈಕ ಕಾರ್ಯಕ್ರಮ- ಜನಲೋಕಪಾಲರ ನೇಮಕ. ಇದರ ಜತೆಯಲ್ಲಿ ಇತ್ತೀಚೆಗೆ ಕೇಂದ್ರದ 14 ಸಚಿವರ ವಿರುದ್ಧ ತನಿಖೆ ನಡೆಯಬೇಕೆಂಬ ಇನ್ನೊಂದು ಬೇಡಿಕೆ ಸೇರಿಸಿಕೊಂಡಿದೆ. 

ಇವೆರಡನ್ನು ಬಿಟ್ಟರೆ ಚುನಾವಣಾ ಸುಧಾರಣೆ, ಭೂಸ್ವಾಧೀನ ಕಾಯಿದೆಯಲ್ಲಿ ಬದಲಾವಣೆ ಮೊದಲಾದ ವಿಷಯಗಳು ಆಗಾಗ ಭಾಷಣಗಳಲ್ಲಿ ಪ್ರಸ್ತಾಪವಾಗುತ್ತಿದ್ದವು ಅಷ್ಟೆ. ಜನಲೋಕಪಾಲರ ನೇಮಕದ ಒಂದು ಕಾರ್ಯಸೂಚಿಯನ್ನು ಇಟ್ಟುಕೊಂಡು ರಾಜಕೀಯ ಪಕ್ಷವನ್ನು ಕಟ್ಟಲಾಗುವುದಿಲ್ಲ.
 
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ, ಅಸ್ಸಾಂನಿಂದ ಮಹಾರಾಷ್ಟ್ರದ ವರೆಗೆ ನೂರಾರು ಸಮಸ್ಯೆಗಳಿವೆ. ಅವುಗಳೆಲ್ಲವೂ ಕಾನೂನಿನ ಮೂಲಕವೇ ಇತ್ಯರ್ಥಗೊಳ್ಳುವಂತಹದ್ದಲ್ಲ, ಅವುಗಳಲ್ಲಿ ಕೆಲವು ಬಿಕ್ಕಟ್ಟುಗಳ ಬಗ್ಗೆ  ಸೈದ್ಧಾಂತಿಕ ನಿಲುವು ಮುಖ್ಯವಾಗುತ್ತದೆ.

ಮೀಸಲಾತಿ, ಮಾವೋವಾದಿ ಚಟುವಟಿಕೆ, ಕಾಶ್ಮೆರದಲ್ಲಿನ ಭಯೋತ್ಪಾದನೆ, ಈಶಾನ್ಯ ರಾಜ್ಯದ ಪ್ರತ್ಯೇಕತಾವಾದಿಗಳು, ಅಲ್ಪಸಂಖ್ಯಾತರು, ದಲಿತರು, ರೈತರು, ಕಾರ್ಮಿಕರು, ಜಲ-ನೆಲ-ಭಾಷೆಯ ತಂಟೆ ತಕರಾರುಗಳು...ಇಂತಹ ನೂರಾರು ಸಮಸ್ಯೆಗಳ ಬಗ್ಗೆ ತನ್ನ ನಿಲುವನ್ನು ರಾಜಕೀಯ ಪಕ್ಷ ಸ್ಪಷ್ಟಪಡಿಸಬೇಕಾಗುತ್ತದೆ. 

ಕಳೆದ 3-4 ದಶಕಗಳ ದೇಶದ ಇತಿಹಾಸವನ್ನು ನೋಡಿದರೆ ಎರಡು ಪ್ರಮುಖ ವಿಷಯಗಳು ನಮ್ಮ ರಾಜಕೀಯವನ್ನು ಪ್ರಭಾವಿಸುತ್ತಾ ಮತ್ತು ಅದರ ದಿಕ್ಕು-ದೆಸೆ ಬದಲಾಯಿಸುತ್ತಾ ಬಂದುದನ್ನು ಕಾಣಬಹುದು. ಮೊದಲನೆಯದು ಭ್ರಷ್ಟಾಚಾರ, ಎರಡನೆಯದು ಅಷ್ಟೇ ಮಹತ್ವದ ವಿಷಯವಾದ ಕೋಮುವಾದ.
 
ಈ ಎರಡನೆ ವಿಷಯದ ಬಗ್ಗೆ ಪ್ರಾರಂಭದಿಂದಲೂ ಅಣ್ಣಾ ತಂಡದ್ದು ಎಡೆಬಿಡಂಗಿ ನಿಲುವು. ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರ ಬಗ್ಗೆ ಪರ ಇಲ್ಲವೆ ವಿರುದ್ಧದ ಸ್ಪಷ್ಟ ನಿಲುವನ್ನು ಕೈಗೊಳ್ಳಲು ಈ ವರೆಗೂ ಸಾಧ್ಯವಾಗಲಿಲ್ಲ ಎನ್ನುವುದು ಇದಕ್ಕೆ ನಿದರ್ಶನ. ಇಷ್ಟು ಮಾತ್ರವಲ್ಲ, ಕಾಶ್ಮೆರದ ಉಗ್ರಗಾಮಿಗಳ ಬಗೆಗಿನ ಪ್ರಶಾಂತ್ ಭೂಷಣ್ ನಿಲುವನ್ನು ಅಣ್ಣಾಹಜಾರೆ ಅವರೇ ಒಪ್ಪಿಕೊಳ್ಳುವುದಿಲ್ಲ. 

ಯೋಗಗುರು ರಾಮದೇವ್ ಪ್ರತಿಪಾದಿಸುತ್ತಿರುವ ಆರ್ಥಿಕ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಒಪ್ಪಲಾರರು, ಕಿರಣ್ ಬೇಡಿ ಹೇಳುತ್ತಿರುವ ಯಾವ ವಿಚಾರವನ್ನೂ ತಂಡದಲ್ಲಿ ಯಾರೂ ಒಪ್ಪುವುದಿಲ್ಲ. ಇರುವ ನಾಲ್ಕುಮಂದಿಯಲ್ಲಿಯೇ ಈ ರೀತಿಯ ಭಿನ್ನಾಭಿಪ್ರಾಯಗಳಿರುವಾಗ ಪಕ್ಷಕ್ಕೆ ಎಲ್ಲಿಂದ ಸೈದ್ಧಾಂತಿಕ ಸ್ಪಷ್ಟತೆ ಬರಲು ಸಾಧ್ಯ?
ಐದನೆಯ ಪರೀಕ್ಷೆ ಎದುರಾಗಲಿರುವುದು ಅಣ್ಣಾತಂಡದ ಕಾರ್ಯಶೈಲಿಯ ವಿಷಯದಲ್ಲಿ. 

ಈಗಿನ ನಮ್ಮ ರಾಜಕೀಯ ಪಕ್ಷಗಳನ್ನು ಬಾಧಿಸುತ್ತಾ ಬಂದಿರುವುದು ಕೇವಲ ಭ್ರಷ್ಟಾಚಾರ ಅಲ್ಲ. ವ್ಯಕ್ತಿಪೂಜೆ, ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಹೈಕಮಾಂಡ್ ಸಂಸ್ಕೃತಿ, ಸರ್ವಾಧಿಕಾರಿ ಧೋರಣೆ, ಗುಪ್ತಕಾರ್ಯಸೂಚಿ ಇತ್ಯಾದಿ ರೋಗಗಳೂ ರಾಜಕೀಯ ಪಕ್ಷಗಳ ಮೇಲಿನ ಜನರ ನಂಬಿಕೆ ಕಡಿಮೆಯಾಗಲು ಕಾರಣ. 

ಕಳೆದ ಒಂದುವರ್ಷದ ಅವಧಿಯ ಅಣ್ಣಾತಂಡದ ಕಾರ್ಯಶೈಲಿಯನ್ನು ನೋಡಿದರೆ ಈ ಎಲ್ಲ ರೋಗಗಳ ಸೋಂಕು ಅದಕ್ಕೂ ತಗಲಿದ ಹಾಗಿದೆ. `ಅಣ್ಣಾ ಎಂದರೆ ಇಂಡಿಯಾ`, `ಐ ಯಾಮ್ ಅಣ್ಣಾ`, `ಅಣ್ಣಾ ಸಂಸತ್‌ಗಿಂತ ದೊಡ್ಡವರು` ಇತ್ಯಾದಿ ಘೋಷಣೆ ಅಣ್ಣಾ ಬೆಂಬಲಿಗರ ಮನಸ್ಸಿನ ಆಳದಲ್ಲಿರುವ ವ್ಯಕ್ತಿಪೂಜೆಯ ದೌರ್ಬಲ್ಯವನ್ನು ತೋರಿಸುತ್ತದೆ. 

ಅಣ್ಣಾತಂಡದ ಬೆರಳೆಣಿಕೆಯ ಸದಸ್ಯರೇ ಕೂಡಿ ಚಳವಳಿಯ ರೂಪುರೇಖೆ ಬಗ್ಗೆ ತೀರ್ಮಾನ ಕೈಗೊಂಡು ಇತರರ ಮೇಲೆ ಹೇರುತ್ತಿರುವುದನ್ನು ವಿರೋಧಿಸಿ ಪ್ರಾರಂಭದಲ್ಲಿ ಜತೆಗಿದ್ದ ಹಲವು ಸದಸ್ಯರು ಬಿಟ್ಟುಹೋಗಿದ್ದರು. 

ಎಷ್ಟೋ ಬಾರಿ ದೆಹಲಿಯಲ್ಲಿರುವ ಅಣ್ಣಾತಂಡದ ನಾಲ್ಕೈದು ಸದಸ್ಯರು ಕೂಡಿಕೈಗೊಳ್ಳುವ ತೀರ್ಮಾನಕ್ಕೆ ಬೆಂಗಳೂರಿನಲ್ಲಿರುವ ನಿವೃತ್ತನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆಯವರು ವಿರೋಧ ವ್ಯಕ್ತಪಡಿಸಿದ್ದುಂಟು. ಹಲವು ಬಾರಿ ಅಣ್ಣಾಹಜಾರೆಯವರೂ ಅಸಮಾಧಾನ ವ್ಯಕ್ತಪಡಿಸಿದ್ದರು. 

ಅಣ್ಣಾಹಜಾರೆಯವರ ಸರ್ವಾಧಿಕಾರಿ ಧೋರಣೆಯ ಕಾರ್ಯಶೈಲಿ ಈಗ ಲೋಕಪ್ರಸಿದ್ಧ, ಅವರ ಕರ್ಮಭೂಮಿಯಾಗಿರುವ ರಾಳೆಗಣಸಿದ್ದಿಗೆ ಹೋದರೆ ಇದರ ಪ್ರತ್ಯಕ್ಷದರ್ಶನ ಮಾಡಿಕೊಂಡು ಬರಬಹುದು. `ಮರಕ್ಕೆ ಕಟ್ಟಿ ಹೊಡೆದು ಬುದ್ದಿ ಕಲಿಸುವ` ಅಣ್ಣಾ ಮಾರ್ಗ, ಮನಪರಿವರ್ತನೆಯ ಮೂಲಕ ಸುಧಾರಣೆಯನ್ನು ತರುವ ಗಾಂಧಿಮಾರ್ಗಕ್ಕಿಂತ ಭಿನ್ನವಾದುದು. 

ಸಾಮಾನ್ಯವಾಗಿ ರಾಜಕೀಯ ನಾಯಕನ ವೈಯಕ್ತಿಕ ಗುಣಾವಗುಣಗಳು ಪಕ್ಷದ ನೀತಿ-ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷ ಕಟ್ಟುವ ತೀರ್ಮಾನ ಪ್ರಕಟಿಸಿದ ತಕ್ಷಣ ಎದುರಾಗಿರುವ ದೊಡ್ಡ ಆರೋಪ ಗುಪ್ತಕಾರ್ಯಸೂಚಿಯದ್ದು. ಒಂದು ಸಾಮಾಜಿಕ ಚಳವಳಿಯಾಗಿ ಬೆಳೆಯುತ್ತಾ ಬಂದ ಅಣ್ಣಾ ಚಳವಳಿ ರಾಜಕೀಯ ಪಕ್ಷದ ರೂಪಧಾರಣೆ ಮಾಡಿರುವುದು ಕೇವಲ ಆಕಸ್ಮಿಕವೇ, ಇದಕ್ಕೆ ಬೇರೆ ಏನಾದರೂ ಒತ್ತಡಗಳಿತ್ತೇ? ಇಲ್ಲವೆ ಇವೆಲ್ಲವೂ ಪೂರ್ವನಿಯೋಜಿತ ಕಾರ್ಯತಂತ್ರವೇ? ಎನ್ನುವ ಪ್ರಶ್ನೆಗಳು ಎದ್ದಿವೆ. 

ಇಂತಹದ್ದೊಂದು ಗುಪ್ತಕಾರ್ಯಸೂಚಿಯನ್ನು ಅವರು ಮೊದಲೇ ಹೊಂದಿದ್ದರು ಎಂಬ ಆರೋಪಗಳು ಕೂಡಾ ಕೇಳಿಬರುತ್ತಿವೆ. ಇದು ಸುಳ್ಳೇ ಇರಬಹುದು, ಆದರೆ ಚುನಾವಣಾ ಕಣದಲ್ಲಿ ನಿಂತು ಬೇರೆ ಪಕ್ಷಗಳ ವಿರುದ್ಧ, ಉದಾಹರಣೆಗೆ ಬಿಜೆಪಿ ವಿರುದ್ಧ `ಗುಪ್ತಕಾರ್ಯಸೂಚಿ`ಯ ಆರೋಪ ಮಾಡಿದಾಗ ಪ್ರತಿಯಾಗಿ ಅವರೂ ಈ ಆರೋಪ ಮಾಡಬಹುದಲ್ಲವೇ?

ಕೊನೆಯದಾಗಿ ಮಾಧ್ಯಮಗಳು ಒಡ್ಡುವ ಪರೀಕ್ಷೆಯನ್ನೂ ಅಣ್ಣಾತಂಡ ಎದುರಿಸಬೇಕಾಗಿದೆ. ಮಾಧ್ಯಮಗಳೇ ಅಣ್ಣಾಚಳವಳಿಯನ್ನು ಈಗಿನ ಮಟ್ಟಕ್ಕೆ ಒಯ್ದು ನಿಲ್ಲಿಸಿದ್ದು ಎಂಬ ಆರೋಪ ಇದೆ. ಮಾಧ್ಯಮದ ಅತಿಅವಲಂಬನೆ ಹೇಗೆ ತಿರುಗುಬಾಣ ಆಗಬಹುದು ಎನ್ನುವುದಕ್ಕೂ ಈ ಚಳವಳಿ ಒಳ್ಳೆಯ ಉದಾಹರಣೆ. 


ಅಣ್ಣಾಹಜಾರೆ ಅವರ ಎರಡು ಉಪವಾಸಗಳು ಮತ್ತು ಅದಕ್ಕೆ ಪೂರ್ವಭಾವಿಯಾಗಿ ನಡೆದ ಚಟುವಟಿಕೆಗಳನ್ನು ಮಾಧ್ಯಮಗಳು ಮುಖ್ಯವಾಗಿ ಟಿವಿ ಚಾನೆಲ್‌ಗಳು ದಿನದ ಇಪ್ಪತ್ತನಾಲ್ಕು ಗಂಟೆ ಕಾಲ ಪ್ರಸಾರ ಮಾಡಿ ಜನಪ್ರಿಯಗೊಳಿಸಿದ್ದು ನಿಜ. ಆದರೆ ಆ `ಮಧುಚಂದ್ರ`ದ ದಿನಗಳು ಈಗ ಮುಗಿದುಹೋಗಿವೆ. 

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ನಂತರ ಮಾಧ್ಯಮ ರಂಗವನ್ನು ಕೂಡಾ ಅಣ್ಣಾತಂಡ ತನ್ನ ಶತ್ರುಗಳ ಪಟ್ಟಿಯಲ್ಲಿ ಸೇರಿಸಿಕೊಂಡು ಬಿಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅಷ್ಟೇ ಪೈಪೋಟಿಯಿಂದ ಮಾಧ್ಯಮಗಳು ನೂರು ಕಣ್ಣುಗಳನ್ನು ಬಿಟ್ಟುಕೊಂಡು ನಿಂತಿವೆ. ಇದನ್ನು ಎದುರಿಸಲು ಅಣ್ಣಾತಂಡ ಮೈಯೆಲ್ಲ ಕಣ್ಣಾಗಿ ಇರಬೇಕಾಗುತ್ತದೆ.