Thursday, May 2, 2013

ಬದಲಾವಣೆ ನಿರೀಕ್ಷೆಯಲ್ಲಿ ತುಯ್ದಾಡುತ್ತಿರುವ ಬಳ್ಳಾರಿ

ಬಳ್ಳಾರಿ: `ನಳದಲ್ಲಿ ದಿನಾ ಉಪ್ಪು ನೀರು ಬಿಡ್ತಾರೆ, ಮೂರು ದಿವ್ಸಕ್ಕೊಮ್ಮೆ ಒಂದು ತಾಸು ಸಿಹಿನೀರು. ಸವುಳು ನೀರು ಕುಡಿದು ಮಕ್ಕಳ ಕೈಕಾಲೆಲ್ಲ ಸೊಟ್ಟಗಾಗಿವೆ' ಎಂದು ಗೋಳಾಡಿದರು ಮೋಕಾ ಗ್ರಾಮದ ಜಲಜಮ್ಮ. `ಎಂಟನೆ ತರಗತಿ ವರೆಗೆ ಮಾತ್ರ ಇಲ್ಲಿ ಸಾಲಿ ಇದೆ, ಮುಂದೆ ಕಲಿಯುವವರು ಬಳ್ಳಾರಿಗೆ (23 ಕಿ.ಮೀ. ದೂ
ರ) ಹೋಗ್ಬೇಕು, ಮಕ್ಕಳು ನಡೆದುನಡೆದು ಸವೆದುಹೋಗ್ಯಾವೆ' ಎಂದು ದುಃಖಿಸಿದರು ಕಾರೇಕಲ್ ಗ್ರಾಮದ ಈರಮ್ಮ.
`ಮೂರು ವರ್ಷಗಳಿಂದ ಮಳೆ ಇಲ್ಲ, ಒಂದು ಹೆಕ್ಟೇರ್ ಬೆಳೆ ನಷ್ಟಕ್ಕೆ ಐದು ಸಾವಿರ ರೂಪಾಯಿ ಪರಿಹಾರ ಕೊಡ್ತೇವೆ ಎಂದು ಹೇಳಿ ಹೋದರು, ಕೈಗೆ ಬಂದದ್ದು 500 ರೂಪಾಯಿ' ಎಂದು ದೂರಿದರು ೀಳ್ಳಗುರ್ಕಿಯ ರೈತ ಶಂಕ್ರಪ್ಪ. `ಊರಲ್ಲೊಂದು ಸರ್ಕಾರಿ ದವಾಖಾನೆ ಇದೆ, ಅಲ್ಲಿ ಡಾಕ್ಟರ್ ಇಲ್ಲ, ಯಾರು ಹೋಗಿ ಕೇಳಿದರೂ ಅಲ್ಲಿರುವ ನರ್ಸಮ್ಮ ಔಷಧಿ ಇಲ್ಲ ಎಂದು ರಾಗ ತೆಗೆಯುತ್ತಾಳೆ' ಎಂದು ಸಿಟ್ಟುಮಾಡಿಕೊಂಡರು ವೀರಾಪುರದ ಸಮಾಜ ಸೇವಕ ಹೊನ್ನೂರಪ್ಪ...
ಈ ಗ್ರಾಮಗಳ ಜನರ ಕರುಣಾಜನಕ ಬದುಕಿನ ಕತೆಯನ್ನು ಹೀಗೆ ಹೇಳುತ್ತಲೇ ಹೋಗಬಹುದು. ಇವರೆಲ್ಲ ಆಂಧ್ರಪ್ರದೇಶದ ಗಡಿಯಿಂದ ಮೂರು-ನಾಲ್ಕು ಕಿ.ಮೀ. ದೂರದಲ್ಲಿರುವ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚೇಳ್ಳಗುರ್ಕಿ, ವೀರಾಪುರ, ಕಾರೇಕಲ್, ಮೋಕಾ ಗ್ರಾಮಗಳಿಗೆ ಸೇರಿದವರು. ಈ ಕ್ಷೇತ್ರದ ಹಾಲಿ ಶಾಸಕ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಸಚಿವ ಶ್ರಿರಾಮುಲು.
ಈ ಗ್ರಾಮಗಳಿಗೆ ಹೋಗುವ ದಾರಿಯಲ್ಲಿಯೇ ಸಿಗುವ ಜೋಳದರಾಶಿಯಲ್ಲಿ ಅರಮನೆಯಂತೆ ಕಟ್ಟಿದ ರಾಮುಲು ಅವರ ಕುಟುಂಬದ ಮೂಲ ಮನೆ ಇದೆ. `ನಮ್ಮೂರಿಗೆ ಯಜಮಾನರೇ ಇಲ್ಲದಂಗ್ ಆಗಿದೆ' ಎಂದಷ್ಟೇ ಹೇಳಿ ತನ್ನ ಹೆಸರನ್ನೂ ತಿಳಿಸದೆ ಆ ಮನೆ ಕಡೆ ಬೆರಳು ಮಾಡಿ ಹೊರಟೇ ಹೋದ ಬಸ್ಸಿಗೆ ಕಾಯುತ್ತಾ ನಿಂತಿದ್ದ ರಾಜವೀರಪ್ಪ.
`ನೀವು ಹೋಗಿದ್ದು ನಾಲ್ಕೈದು ಹಳ್ಳಿಗಳು ಮಾತ್ರ ಸಾರ್, ಇಡೀ ಬಳ್ಳಾರಿ ಜಿಲ್ಲೆ ಹೀಗೆಯೇ ಇದೆ' ಎಂದರು ನನ್ನ ಪ್ರವಾಸದ ಅನುಭವವನ್ನು ಕೇಳಿದ ಬಳ್ಳಾರಿಯ ಪತ್ರಕರ್ತ ಮಿತ್ರರು.
ಹೀಗಿದ್ದರೂ ಶ್ರಿರಾಮುಲು ಈ ಬಾರಿಯೂ ಗೆದ್ದುಬಿಟ್ಟರೆ ನನಗಂತೂ ಆಶ್ಚರ್ಯವಾಗಲಾರದು. ಇದಕ್ಕೆ ಕಾರಣ ತಮ್ಮ ಕಷ್ಟ-ಕಾರ್ಪಣ್ಯಗಳನ್ನೆಲ್ಲ ನೋವಿನಿಂದ ತೋಡಿಕೊಂಡ ಜನರ ಇನ್ನೊಂದು ಮುಖದ ದರ್ಶನ. `ಜೆಡಿಎಸ್' ಎಂದು ಸ್ನೇಹಿತರಿಂದಲೇ ಆರೋಪಕ್ಕೊಳಗಾದ ಚೇಳ್ಳಗುರ್ಕಿಯ ಶಂಕ್ರಪ್ಪ ಅವರನ್ನು ಹೊರತುಪಡಿಸಿ ಉಳಿದಂತೆ ಜಲಜಮ್ಮ, ಈರಮ್ಮ, ಹೊನ್ನೂರಪ್ಪ ಮತ್ತಿತರರು ಶ್ರಿರಾಮುಲು ವಿರುದ್ಧ ಚಕಾರ ಎತ್ತಲಿಲ್ಲ.
`ರಾಮುಲು ಒಳ್ಳೆ ಮನುಷ್ಯ, ಸುತ್ತ ಇರೋ ಜನ ಸರಿ ಇಲ್ಲ', `ಆಯಪ್ಪ ಏನ್ ಮಾಡ್ಲಿಕಾಗ್‌ತ್ತೆ, ಇಡೀ ರಾಜ್ಯ ಸುತ್ತಬೇಕು', `ನಮ್ ಹಣೇಲಿ ಇದೇ ರೀತಿ ಬರೆದುಬಿಟ್ಟಿರುವಾಗ ಬೇರೆಯವರನ್ನು ದೂರಿ ಏನ್ ಲಾಭ?' ಎಂಬಿತ್ಯಾದಿ ಹೇಳಿಕೆಗಳ ಮೂಲಕ ಅವರೆಲ್ಲ ಪರೋಕ್ಷವಾಗಿ ಶ್ರೀರಾಮುಲು ಅವರನ್ನು ಸಮರ್ಥಿಸತೊಡಗಿದ್ದರು. ಊರಿನ ಸಮಸ್ಯೆಗಳನ್ನು ಭೂತಾಕಾರವಾಗಿ ಬಣ್ಣಿಸಿದ ಚೇಳ್ಳಗುರ್ಕಿಯ ಹಿರಿಯರೊಬ್ಬರು ಕೊನೆಗೆ ಶ್ರೀರಾಮುಲು ಅವರನ್ನು ಹೊಗಳತೊಡಗಿದಾಗ ಪಕ್ಕದಲ್ಲಿದ್ದ ಹಿರಿಯನೊಬ್ಬ ಬಳಿಬಂದು ಪಿಸುದನಿಯಲ್ಲಿ `ಅವನ ಜಾತಿ ಕೇಳಿಬಿಡಿ ಸತ್ಯ ಗೊತ್ತಾಗುತ್ತದೆ' ಎಂದ. ನಾನು ಕೇಳಲಿಲ್ಲ ಸತ್ಯ ಗೊತ್ತಾಗಿತ್ತು.
ಅಂದಾಜು ಎರಡರಿಂದ ನಾಲ್ಕು ಸಾವಿರದವರೆಗೆ ಜನಸಂಖ್ಯೆ ಹೊಂದಿರುವ ಈ ಗ್ರಾಮಗಳಲ್ಲಿ ಬಹುಸಂಖ್ಯೆಯಲ್ಲಿರುವವರು ಶ್ರೀರಾಮುಲು ಅವರು ಸೇರಿರುವ ನಾಯಕ ಜಾತಿಯವರು. ಈ ಮುಗ್ಧ ಜನರ ದೂರು, ದುಮ್ಮಾನಗಳೆಲ್ಲ ಮತಯಂತ್ರದ ಬಟನ್ ಒತ್ತುವ ಗಳಿಗೆಯಲ್ಲಿ ಉಕ್ಕಿಬರುವ ಜಾತಿ ಪ್ರೀತಿ ಎದುರು ಕರಗಿಹೋಗುತ್ತದೆ. ಇದು ಶ್ರಿರಾಮುಲು ಅವರಿಗೆ ಮಾತ್ರವಲ್ಲ, ಕೇವಲ ಜಾತಿ ಮತ್ತು ದುಡ್ಡನ್ನಷ್ಟೇ ಬಳಸಿಕೊಂಡು ರಾಜಕೀಯ ಮಾಡುವ ಎಲ್ಲರಿಗೂ ಗೊತ್ತಿರುವ ಸತ್ಯ.
ಜಾತಿ ಆಗಲೇ ಶ್ರಿರಾಮುಲು ಅವರನ್ನು ಅರ್ಧ ಗೆಲ್ಲಿಸಿದೆ, ಇನ್ನರ್ಧ ಗೆಲುವು ಸಂಪಾದನೆಗಾಗಿ ಅವರು `ಕೊಡುಗೈ ದಾನಿ'ಗಳಾಗಬೇಕು. ಮೋಕಾದಲ್ಲಿ ನಮ್ಮ ಕಾರು ಕಂಡು ಆಸೆಯಿಂದ ಓಡಿಬಂದ ಮಧ್ಯವಯಸ್ಕರ ಗುಂಪೊಂದು ವಿಷಯ ತಿಳಿದು `ಹಿಂದೆಲ್ಲ ಇಷ್ಟೊತ್ತಿಗೆ ಒಂದು ರೌಂಡು ಮುಗಿದುಹೋಗುತ್ತಿತ್ತು, ಈ ಬಾರಿ ಬಹಳ ಸ್ಟ್ರಿಕ್ಟ್ ಅಂತೆ ಏನೂ ಬಂದಿಲ್ಲ' ಎಂದು ನಿರಾಶೆ ವ್ಯಕ್ತಪಡಿಸಿದರು. `ಲೀಡರ್‌ಗಳ ಕೈಗೆ ಕೊಟ್ಟು ಹೋಗಿದ್ದಾರಂತೆ, ನಮ್ಮ ಕೈಗೆ ಬಂದಿಲ್ಲ' ಎಂದರು ಇನ್ನೊಬ್ಬ ವ್ಯಕ್ತಿ ದೂರು ಹೇಳುವ ದನಿಯಲ್ಲಿ..
`ಹಿಂದಿನ ಚುನಾವಣೆಯ ಕಾಲದಷ್ಟು ದುಡ್ಡು ಈಗ ಹರಿದಾಡುತ್ತಿಲ್ಲ' ಎನ್ನುವ ಅಭಿಪ್ರಾಯ ಇಲ್ಲಿ ಸಾರ್ವತ್ರಿಕವಾಗಿದೆ. ಜನಾರ್ದನ ರೆಡ್ಡಿಯವರ ಅಣ್ಣ ಸೋಮಶೇಖರ ರೆಡ್ಡಿ ಚುನಾವಣೆಯಿಂದ ಹಿಂದೆ ಸರಿದದ್ದು, ಮತ್ತೊಬ್ಬ ಅಣ್ಣ ಕರುಣಾಕರ ರೆಡ್ಡಿ ಬಿಜೆಪಿಯಲ್ಲಿಯೇ ಉಳಿದದ್ದು,  ಶ್ರಿರಾಮುಲು ಅವರ ಬಂಟ ನಾಗೇಂದ್ರ ಕೂಡ್ಲಿಗಿಯಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವುದು... ಈ ಬೆಳವಣಿಗೆಗಳೆಲ್ಲ ಬಳ್ಳಾರಿ ಜನರನ್ನು ಗೊಂದಲಕ್ಕೆ ತಳ್ಳಿದೆ. `ರೆಡ್ಡಿ ಕುಟುಂಬ ಮತ್ತು ಶ್ರಿರಾಮುಲು ಸಂಬಂಧ ಕೆಟ್ಟುಹೋಗಿದೆ, ಅದಕ್ಕೆ ದುಡ್ಡಿಲ್ಲ' ಎನ್ನುವವರು ಇದ್ದಹಾಗೆಯೇ `ಇವೆಲ್ಲ ಅವರೇ ಕೂಡಿ ಮಾಡುತ್ತಿರುವ ನಾಟಕ' ಎನ್ನುವವರೂ ಇದ್ದಾರೆ.
`ಈ 10-12 ವರ್ಷಗಳಲ್ಲಿ ನಮ್ಮ ಜನರ ಆತ್ಮಸಾಕ್ಷಿಯೇ ಸತ್ತುಹೋಗಿದೆ' ಎಂದು ಸಿಟ್ಟಿನಿಂದಲೇ ಹೇಳಿದರು ಲೋಹಿಯಾ ಪ್ರಕಾಶನದ  ಚೆನ್ನಬಸವಣ್ಣ ಬಳ್ಳಾರಿಯ ಕತೆಯನ್ನು ಬಣ್ಣಿಸುತ್ತಾ.  ಹೆಚ್ಚುಕಡಿಮೆ ದಶಕದ ಅವಧಿಯಲ್ಲಿ ಕಣ್ಣೆದುರೇ ಬದಲಾಗಿ ಹೋದ ಬಳ್ಳಾರಿಯ ಮುಖಗಳನ್ನು ಸಮೀಪದಿಂದ ನೋಡಿ ಸಂಕಟಪಡುತ್ತಿರುವವರು ಅವರು.
`ಕಕ್ಕ, ಮಾಮಾ, ಅಣ್ಣಾ ಈ ರೀತಿ ಸಂಬಂಧ ಹಚ್ಚಿ ಮಾತನಾಡಿಯೇ ನಮಗೆ ಅಭ್ಯಾಸ. ಹಿಂದೆಯೂ ಇಲ್ಲಿಯೂ ಒಂದಷ್ಟು ಗೂಂಡಾಗಿರಿ, ದರ್ಪ ದೌರ್ಜನ್ಯಗಳಿದ್ದವು. ಆದರೆ ಸಾಮಾನ್ಯ ಜನರು ಅವರ ಪಾಡಿಗೆ ಬದುಕಲು ತೊಂದರೆ ಆಗಿರಲಿಲ್ಲ. ಇದ್ದಕ್ಕಿದ್ದ ಹಾಗೆ ಎಲ್ಲವೂ ಬದಲಾಗಿ ಹೋಯಿತು. ಗಣಿಲೂಟಿಕೋರರು ನಡೆಸಿದ ಅಟ್ಟಹಾಸದಿಂದ ನಲುಗಿಹೋಗಿರುವ ನಮ್ಮ ಬಳ್ಳಾರಿ ಸುಧಾರಿಸಿಕೊಳ್ಳಲು ಇನ್ನು ಕೆಲವು ವರ್ಷಗಳು ಬೇಕಾಗಬಹುದು' ಎಂದು ನಿಟ್ಟುಸಿರುಬಿಟ್ಟರು ಚೆನ್ನಬಸವಣ್ಣ.
`ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಬೀದಿಬದಿಯಲ್ಲಿ ಮುತ್ತುರತ್ನ ರಾಶಿ ಹಾಕಿ ಮಾರಾಟ ಮಾಡುತ್ತಿದ್ದರು...' ಎಂಬ ಕತೆಯನ್ನು ಕೇಳುತ್ತಾ ಬೆಳೆದವರು ಬಳ್ಳಾರಿಯ ಜನ. ಇದ್ದಕ್ಕಿದ್ದ ಹಾಗೆ ಅವರು ಗತವೈಭವವನ್ನೇ ಹೋಲುವ ಘಟನಾವಳಿಗಳಿಗೆ ಮೂಕ ಸಾಕ್ಷಿಯಾಗುವಂತಾಯಿತು. `ರೆಡ್ಡಿಗಳು ಬೆಳಿಗ್ಗೆ ತಿಂಡಿತಿನ್ನಲು ಬೆಂಗಳೂರಿಗೆ, ಮಧ್ಯಾಹ್ನ ಬಿರಿಯಾನಿ ತಿನ್ನಲು ಹೈದರಾಬಾದ್‌ಗೆ ಹೆಲಿಕಾಪ್ಟರ್‌ನಲ್ಲಿ ಹೋಗುತ್ತಾರಂತೆ', `ರೆಡ್ಡಿಗಳು ಚಿನ್ನದ ಕುರ್ಚಿಯಲ್ಲಿ ಕೂರ‌್ತಾರಂತೆ, ಚಿನ್ನದ ಚಮಚದಲ್ಲಿ ಊಟ ಮಾಡ್ತಾರಂತೆ' ಎಂಬಿತ್ಯಾದಿ ಸುದ್ದಿಗಳು ಬಳ್ಳಾರಿಯ ಗಾಳಿಯಲ್ಲಿ ನಿತ್ಯ ಹಾರಾಡುತ್ತಿದ್ದುದನ್ನು ಇಲ್ಲಿನ ಜನ ಈಗಲೂ ನೆನಪಿಸಿಕೊಳ್ಳುತ್ತಾರೆ.
ಇಷ್ಟೆಲ್ಲ ಮೆರೆದಾಡಿದ, ಇಡೀ ಸರ್ಕಾರ ತಮ್ಮ ಅಂಗೈಮುಷ್ಟಿಯಲ್ಲಿದೆ ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದ ರೆಡ್ಡಿಸೋದರರು ಕನಿಷ್ಠ ಬಳ್ಳಾರಿ ನಗರದ ಸುಧಾರಣೆಯನ್ನಾದರೂ ಮಾಡಬಹುದಿತ್ತು. ಒಂದೆರಡು ಮುಖ್ಯ ರಸ್ತೆಗಳನ್ನು ಹೊರತುಪಡಿಸಿದರೆ ಬಳ್ಳಾರಿ ನಗರ ದೊಡ್ಡ ಕೊಳೆಗೇರಿಯಂತಿದೆ. ಗುಂಡಿಬಿದ್ದ ರಸ್ತೆಗಳು, ಕಿತ್ತುಹೋಗಿರುವ ಕಾಲ್ದಾರಿಗಳು, ಅನಿಯಂತ್ರಿತವಾಗಿ ನಡೆಯುತ್ತಿರುವ ಒತ್ತುವರಿಗಳು, ಕೈಕೊಡುತ್ತಲೇ ಇರುವ ವಿದ್ಯುತ್, ಮರೀಚಿಕೆಯಂತೆ ಕಾಡುತ್ತಿರುವ ಕುಡಿಯುವ ನೀರು- ಒಂದು ನಗರಕ್ಕೆ ಅವಶ್ಯಕವಾದ ಮೂಲಸೌಲಭ್ಯಗಳ್ಯಾವುದೂ ಈ ನಗರದಲ್ಲಿ ಇಲ್ಲ.
`ಯಾಕೆ ಇಲ್ಲ ಎಂದರೆ ಬೇಕು ಎಂದು ಕೇಳುವವರೇ ಇಲ್ಲ ಸಾರ್ ಇಲ್ಲಿ. ಎಲ್ಲವನ್ನೂ ಸಹಿಸಿಕೊಂಡು ಇವೆಲ್ಲ ಸಾಮಾನ್ಯ ಎಂಬಂತೆ ಜನ ಬದುಕುತ್ತಿದ್ದಾರೆ. ಬೇರೆ ನಗರಗಳನ್ನು ನೋಡಿ ಬಂದ ನಮಗೆ ಇವೆಲ್ಲ ನೋಡಿ ಅಸಹ್ಯ ಅನಿಸುತ್ತಿದೆ' ಎಂದ ನಿವೃತ್ತ ಎಂಜಿನಿಯರ್ ಶಿವರಾಮಯ್ಯನವರ ಮಾತಿನಲ್ಲಿ ಅಸಹಾಯಕತೆ ಇತ್ತು.
`ಜನರಲ್ಲಿ ದುಡ್ಡಿನ ಲೋಭವನ್ನು ಹುಟ್ಟಿಸಿದ್ದು ಬಿಟ್ಟರೆ ಅವರೇನೂ ಮಾಡಲಿಲ್ಲ, ಕೆಟ್ಟುಹೋದವರಲ್ಲಿ ಹೆಚ್ಚಿನವರು ಯುವಕರು. ಒಂದು ತಲೆಮಾರು ಹಾಳಾಗಿ ಹೋಯಿತು' ಎಂದರು ವೀರಾಪುರದಲ್ಲಿರುವ ತಮ್ಮ ಮನೆಗೆ ಬಳ್ಳಾರಿಯಿಂದ ಬಂದಿದ್ದ ವಕೀಲ ಜಯರಾಮಯ್ಯ. `ಬದಲಾವಣೆ ಎಂದರೆ ಏನು?' ಒಬ್ಬ ಗಣಿಧಣಿಯನ್ನು ಸೋಲಿಸಿ ಇನ್ನೊಬ್ಬನನ್ನು ಆರಿಸುವುದೇ? ಸುಮ್ಮನೆ ರೆಡ್ಡಿ ಸೋದರರನ್ನು ದೂರಿ ಏನು ಪ್ರಯೋಜನ ಸಾರ್. ಈ ಕಾಂಗ್ರೆಸ್ ಪಕ್ಷದವರೇ ಗಣಿಲೂಟಿಯ ಮೂಲಪುರುಷರು. ಅವರು ಹೋಗಿ ಇವರು ಬರಬಹುದು. ಬಳ್ಳಾರಿಗೆ ಗಣಿಲೂಟಿಕೋರರಿಂದ ಮುಕ್ತಿ ಇಲ್ಲ' ಎಂದು ಸಣ್ಣಭಾಷಣವನ್ನೇ ಮಾಡಿಬಿಟ್ಟ ತನ್ನನ್ನು ವಿದ್ಯಾರ್ಥಿ ಮುಖಂಡ ಎಂದು ಪರಿಚಯಿಸಿಕೊಂಡ ಚೇತನ್.
`ಅಷ್ಟೊಂದು ನಿರಾಶರಾಗಬೇಕಾದ ಅಗತ್ಯವೂ ಇಲ್ಲ. ಅತಿರೇಕದ ಎರಡು ತುದಿಗಳನ್ನು ನಾವು ನೋಡಿ ಆಗಿದೆ. ದುಡ್ಡಿನ ಬಲದಿಂದ ನಿರ್ಲಜ್ಜರೀತಿಯಲ್ಲಿ ಮೆರೆದವರನ್ನೂ ನೋಡಿದ್ದೇವೆ. ಆ ರೀತಿ ಮೆರೆದವರು ಜೈಲು ಕಂಬಿ ಎಣಿಸುತ್ತಿರುವುದನ್ನೂ ನೋಡಿದ್ದೇವೆ. ಈ ಬೆಳವಣಿಗೆಗಳನ್ನು ಬಳ್ಳಾರಿಯ ಜನ ಹೇಗೆ ಸ್ವೀಕರಿಸಿದ್ದಾರೆ? ಅವರು ಕಲಿತ ಪಾಠವೇನು? ಇದು ಈ ಚುನಾವಣೆಯ ಫಲಿತಾಂಶದಲ್ಲಿ ಗೊತ್ತಾಗಲಿದೆ' ಎಂದು ಹೇಳಿದ ಚೆನ್ನಬಸವಣ್ಣ ಅವರ ಮಾತಿನಲ್ಲಿ ಬಳ್ಳಾರಿಯ ಜನರ ಬಗ್ಗೆ ಭರವಸೆ ಇತ್ತು.

Wednesday, May 1, 2013

ಕುಸಿದು ಬೀಳುತ್ತಿರುವ ಮುಂಬೈ ಕರ್ನಾಟಕದ ಬಿಜೆಪಿ ಕೋಟೆ

ಬಳ್ಳಾರಿ:  ಮುಂಬೈ ಕರ್ನಾಟಕ ಮತ್ತು ಬಳ್ಳಾರಿ, 2008ರ ವಿಧಾನಸಭಾ ಚುನಾವಣೆಯ `ಆಟ ಬದಲಿಸಿದ' ಪ್ರದೇಶ. ಕಾಂಗ್ರೆಸ್ ದೂಳಿಪಟವಾಗಿದ್ದು ಮತ್ತು ಬಿಜೆಪಿಗೆ ಅಧಿಕಾರಕ್ಕೆ ಬರುವ ಸಂಖ್ಯಾಬಲವನ್ನು ತಂದುಕೊಟ್ಟ ಪ್ರದೇಶ ಇದು. ಬಿಜಾಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳನ್ನೊಳಗೊಂಡ ಈ ಪ್ರದೇಶಕ್ಕೆ ಬಳ್ಳಾರಿಯನ್ನೂ ಸೇರಿಸಿದರೆ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 59 ಆಗುತ್ತದೆ.
ಇದರಲ್ಲಿ 44 ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ ಕಾಂಗ್ರೆಸ್ ಉಳಿಸಿಕೊಳ್ಳಲು ಸಾಧ್ಯವಾಗಿದ್ದು ಕೇವಲ ಹದಿಮೂರು ಮಾತ್ರ. ಜೆಡಿ(ಎಸ್) ಪಕ್ಷದಿಂದ ಗೆದ್ದಿದ್ದ ಇಬ್ಬರು ಶಾಸಕರು ಕೂಡಾ ನಂತರ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಈ ಭಾಗದಲ್ಲಿ ಕಾಂಗ್ರೆಸ್‌ನ ಮಾನ ಉಳಿಸಿದ್ದು, ಏಳು ಶಾಸಕರನ್ನು ನೀಡಿದ ಬೆಳಗಾವಿ ಜಿಲ್ಲೆ ಮಾತ್ರ. ಈ ಬಾರಿ ವಿಧಾನಸಭಾ ಚುನಾವಣೆಯ `ಆಟ ಬದಲಿಸಲಿರುವ' ಪ್ರದೇಶ ಕೂಡಾ ಇದೇ ಎನ್ನುವುದರಲ್ಲಿ ಅನುಮಾನ ಇಲ್ಲ.
ರಾಜ್ಯದ ಕರಾವಳಿ ಇಲ್ಲವೆ ಮಧ್ಯ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಂತೆ ಮುಂಬೈಕರ್ನಾಟಕ ಬಿಜೆಪಿಯ ಸಾಂಪ್ರದಾಯಿಕ ನೆಲೆ ಅಲ್ಲ. ಹೀಗಿದ್ದರೂ ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿಯ ಚೈತ್ರಯಾತ್ರೆಗೆ ಮುಖ್ಯವಾಗಿ ಕಾರಣಗಳು ಮೂರು. ಮೊದಲನೆಯದಾಗಿ ಈ ಭಾಗದಲ್ಲಿ ಸಾಂಪ್ರದಾಯಿಕವಾಗಿ ಇರುವ ಕಾಂಗ್ರೆಸ್ ವಿರೋಧಿ ಮತಗಳು, ಎರಡನೆಯದಾಗಿ ವಚನಭಂಗದಿಂದಾಗಿ ಸಾಮೂಹಿಕವಾಗಿ ಸಿಡಿದೆದ್ದ ಲಿಂಗಾಯತ ಸಮುದಾಯ, ಮೂರನೆಯದಾಗಿ ಬಳ್ಳಾರಿಯ ರೆಡ್ಡಿ ಸೋದರರ ದುಡ್ಡು ಮತ್ತು ಶ್ರಿರಾಮುಲು ಅವರಿಗೆ ವ್ಯಕ್ತವಾದ ಜಾತಿ ಮತದಾರರ ಬೆಂಬಲ.
ಪ್ರಾರಂಭದಲ್ಲಿ ಎಸ್.ನಿಜಲಿಂಗಪ್ಪ ಅವರ ನೇತೃತ್ವದ ಸಂಸ್ಥಾ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದ ಈ ಭಾಗದ ಲಿಂಗಾಯತರು ನಿಧಾನವಾಗಿ ಜನತಾ ಪರಿವಾರದ ಭಾಗವಾಗಿ ಹೋಗಿದ್ದರು. ಎಂಬತ್ತರ ದಶಕದಲ್ಲಿ ಉಚ್ಛ್ರಾಯಸ್ಥಿತಿಯಲ್ಲಿದ್ದ ಜನತಾ ಪರಿವಾರದಲ್ಲಿ ಎಸ್.ಆರ್.ಬೊಮ್ಮಾಯಿ ಅವರಂತಹ ಹಿರಿಯರ ಜತೆ ಧಾರವಾಡ ಜಿಲ್ಲೆಯ ಚಂದ್ರಕಾಂತ ಬೆಲ್ಲದ, ಬಿ.ಆರ್.ಯಾವಗಲ್, ಬಿ.ಜಿ.ಬಣಕಾರ್, ಬಿ.ಎಚ್.ಬನ್ನಿಕೋಡ್, ಪಿ.ಸಿ.ಸಿದ್ದನಗೌಡರ್, ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲೆಯ ಶಿವಾನಂದ ಕೌಜಲಗಿ, ಉಮೇಶ್ ಕತ್ತಿ, ಎ.ಬಿ.ಪಾಟೀಲ್, ಡಿ.ಬಿ.ಇನಾಂದಾರ್, ಲೀಲಾದೇವಿ ಪ್ರಸಾದ್. ಬಿಜಾಪುರ ಜಿಲ್ಲೆಯ ರಮೇಶ್ ಜಿಗಜಿಣಗಿ, ಗೋವಿಂದಪ್ಪ ಕಾರಜೋಳ, ಎಚ್.ವೈ.ಮೇಟಿ, ಜಗಜೀವನರಾವ್ ದೇಶಮುಖ್ ಮೊದಲಾದ ನಾಯಕರಿದ್ದರು.
ಇವರಲ್ಲಿ ಬಹಳಷ್ಟು ಮಂದಿ ಶಾಸಕರಾಗಿ ಚುನಾಯಿತರಾಗಿ ನಂತರ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದವರು. ಜನತಾ ಪರಿವಾರ ಅಳಿಯುತ್ತಾ ಬಂದಂತೆ ಆ ಜಾಗವನ್ನು ಆಕ್ರಮಿಸಿಕೊಂಡದ್ದು ಬಿಜೆಪಿ. ನಿಧಾನವಾಗಿ ಮುಂಬೈ ಕರ್ನಾಟಕ ಭಾಗದ ಕಾಂಗ್ರೆಸ್ ವಿರೋಧಿ ಮತಗಳನ್ನು ನುಂಗುತ್ತಾ ಬಿಜೆಪಿ ಬೆಳೆಯುತ್ತಾ ಹೋಗಿದ್ದು ಈಗ ಇತಿಹಾಸ. ಅದರ ಅತ್ಯುನ್ನತ ಸ್ಥಿತಿಯನ್ನು ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಣಬಹುದು.
ಇಡೀ ಕರ್ನಾಟಕದಲ್ಲಿ ಲಿಂಗಾಯತ ಬಾಹುಳ್ಯ ಇರುವ ಪ್ರದೇಶ ಮುಂಬೈ ಕರ್ನಾಟಕ. ಲಿಂಗಾಯತರ ಜನಸಂಖ್ಯೆ ರಾಜ್ಯದಲ್ಲಿ ಶೇಕಡಾ ಹದಿನೇಳರಷ್ಟಿದ್ದರೂ ಮುಂಬೈ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಇದು 20ರಿಂದ 30ರಷ್ಟಿದೆ. ಇದರಿಂದಾಗಿಯೇ ಇಲ್ಲಿನ ಹೆಚ್ಚಿನ ಕ್ಷೇತ್ರಗಳ ಮೇಲೆ ಅಪ್ಪಳಿಸಿದ ವಚನಭಂಗದ ವಿರೋಧಿ ಅಲೆಯ ಮೇಲೇರಿ ಬಿಜೆಪಿ ಅಭ್ಯರ್ಥಿಗಳು ಸುಲಭದಲ್ಲಿ ಗೆಲುವಿನ ದಡ ಸೇರಿದ್ದರು. ರಾಜ್ಯದಾದ್ಯಂತ ಬಳ್ಳಾರಿಯ ರೆಡ್ಡಿ ಸೋದರರ ದುಡ್ಡು ಹರಿದಾಡಿದರೂ ಹೈದರಾಬಾದ್ ಮತ್ತು ಮುಂಬೈ ಕರ್ನಾಟಕದಲ್ಲಿ ಹಣದ ಹೊಳೆ  ದಡಮೀರಿ ಹರಿದಿತ್ತು.
ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶ್ರಿರಾಮುಲು ಅವರು ಸಂಘಟಿಸಿದ್ದ ಜಾತಿಮೂಲದ ಬೆಂಬಲ ಕೂಡಾ ಇಲ್ಲಿ ಬಿಜೆಪಿ ಗೆಲುವಿಗೆ  ನೆರವಾಯಿತು.  ಇದರಿಂದಾಗಿಯೇ ಬಳ್ಳಾರಿಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟರಲ್ಲಿ ಬಿಜೆಪಿ ಗೆದ್ದಿತ್ತು. ಆ ಎಂಟರಲ್ಲಿ ಐವರು ಶಾಸಕರು ರಾಮುಲು ಜಾತಿಯಾದ ನಾಯಕ ಸಮಾಜದವರು ಎಂಬುದು ಗಮನಾರ್ಹ. ಇದರ ಜತೆಯಲ್ಲಿ ಗದಗ ಕ್ಷೇತ್ರದ ಉಸ್ತುವಾರಿ ಸಚಿವರಾಗಿದ್ದ ಶ್ರಿರಾಮುಲು ಆ ಜಿಲ್ಲೆಯ ಎಲ್ಲ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಬಿಟ್ಟಿದ್ದರು.
ಬಿಜೆಪಿಗೆ ನಿರಾಯಾಸವಾಗಿ ಗೆಲುವು ತಂದುಕೊಟ್ಟ ಮುಂಬೈ ಕರ್ನಾಟಕ ಮತ್ತು ಬಳ್ಳಾರಿಯ ಈಗಿನ ಚಿತ್ರ ಬದಲಾಗಿರುವುದು ಮಾತ್ರವಲ್ಲ ಹೆಚ್ಚುಕಡಿಮೆ ತಲೆಕೆಳಗಾಗಿ ಬಿಟ್ಟಿದೆ. ರಾಜ್ಯದಲ್ಲಿ ಬಿಜೆಪಿಗೆ ಮಾರಣಾಂತಿಕ ಹೊಡೆತ ನೀಡಲಿರುವುದು ಈ ಪ್ರದೇಶ ಎನ್ನುವುದರಲ್ಲಿ ಅನುಮಾನ ಬೇಡ. ಏಳು ಜಿಲ್ಲೆಗಳಲ್ಲಿದ್ದ 46 ಬಿಜೆಪಿ ಶಾಸಕರ ಪೈಕಿ ಹಾವೇರಿಯಿಂದ ನಾಲ್ಕು (ಸಿ.ಎಂ.ಉದಾಸಿ, ನೆಹರೂ ಓಲೇಕಾರ್,ಜಿ.ಶಿವಣ್ಣ ಮತ್ತು ಸುರೇಶ್‌ಗೌಡ) ಮತ್ತು ಬಿಜಾಪುರ ಹಾಗೂ ಧಾರವಾಡದಿಂದ ತಲಾ ಒಬ್ಬ ಶಾಸಕರು ( ವಿಠ್ಠಲ ಕಟಕದೊಂಡ ಮತ್ತು ಚಿಕ್ಕನಗೌಡರ್)  ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಸೇರಿದ್ದಾರೆ. ಇವರಲ್ಲಿ ಸುರೇಶ್‌ಗೌಡ ಪಾಟೀಲ್ ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.  ಬಿಜೆಪಿ ಶಾಸಕರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಕೆಜೆಪಿಗೆ ಪಕ್ಷಾಂತರಗೊಂಡಿರುವ ಶಾಸಕರ ಸಂಖ್ಯೆ ಕಡಿಮೆ ಎಂದು ಅನಿಸಿದರೂ ಪರಿಣಾಮ ಅಷ್ಟಕ್ಕೆ ಸೀಮಿತವಾಗಿರಲಾರದು.
ಬಿಜೆಪಿಯ ಕುಸಿತವನ್ನು ತಡೆದು ನಿಲ್ಲಿಸುವಂತಹ ಬಲಿಷ್ಠ ನಾಯಕರು ಇಲ್ಲದಿರುವುದು ಕೂಡಾ ಆ ಪಕ್ಷದ ಹಿನ್ನಡೆಗೆ ಕಾರಣವಾಗಿದೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿದ್ದರೂ ಮುಂಬೈ ಇಲ್ಲವೆ ಹೈದರಾಬಾದ್ ಕರ್ನಾಟಕದ ಲಿಂಗಾಯತರು ಅವರನ್ನು ಹೆಚ್ಚು ಗಂಭೀರವಾಗಿ ಸ್ವೀಕರಿಸಿದಂತೆ ಕಾಣುತ್ತಿಲ್ಲ.
ಇನ್ನೊಂದೆಡೆ ಕೆಜೆಪಿಯ ದಾಳಿಯನ್ನು ಬಿಜೆಪಿಯಲ್ಲಿ ಅಳಿದುಳಿದ ಜನತಾ ಪರಿವಾರದ ನಾಯಕರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ರಮೇಶ್ ಜಿಗಜಿಣಗಿ, ಗೋವಿಂದ ಕಾರಜೋಳ ಮೊದಲಾದವರು ಎದುರಿಸುವ ಪ್ರಯತ್ನ ಮಾಡುತ್ತಿದ್ದರೂ ಅದು ಪರಿಣಾಮಕಾರಿಯಾಗಿಲ್ಲ. ಅವರ ಪ್ರಭಾವ ಸ್ವಂತ ಕ್ಷೇತ್ರಗಳಿಗಷ್ಟೇ ಸೀಮಿತವಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿಯಲ್ಲಿದ್ದಾಗ ಯಡಿಯೂರಪ್ಪನವರನ್ನು ಬೆಂಬಲಿಸುತ್ತಾ ಬಂದ ಲಿಂಗಾಯತರ ಜತೆ, ಬಿಜೆಪಿಯಲ್ಲಿದ್ದಾರೆ ಎನ್ನುವ ಕಾರಣಕ್ಕಾಗಿ ಅವರನ್ನು ವಿರೋಧಿಸುತ್ತಿದ್ದ ಲಿಂಗಾಯತರು ಕೂಡಾ ಈ ಬಾರಿ ಕೆಜೆಪಿ ಬೆಂಬಲಿಸುತ್ತಿರುವುದನ್ನು ಕಾಣಬಹುದು. ಇವರಲ್ಲಿ ಬಹಳಷ್ಟು ಲಿಂಗಾಯತ ಬುದ್ದಿಜೀವಿಗಳೆನ್ನುವುದು ಆಶ್ಚರ್ಯಕರವಾದರೂ ನಿಜ.
ಬಿ.ಎಸ್.ಯಡಿಯೂರಪ್ಪನವರ ವಿರುದ್ಧದ  ಮುಖ್ಯ ಆರೋಪವಾದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ  ಮುಖ್ಯವಿಷಯವಾಗಿ ಚರ್ಚೆಗೊಳಗಾಗದೆ ಇರುವುದು ಅವರನ್ನು ಬೆಂಬಲಿಸುತ್ತಿರುವವರ ಮುಜುಗರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದೆ.
ಆದರೆ ಹೈದರಾಬಾದ್ ಕರ್ನಾಟಕದಂತೆ ಇಲ್ಲಿಯೂ ಕೂಡಾ ಕೆಜೆಪಿಗೆ ವ್ಯಕ್ತವಾಗುತ್ತಿರುವ ಬೆಂಬಲ ಸ್ಥಾನಗಳಾಗಿ ಪರಿವರ್ತನೆಯಾಗುವ ಸಾಧ್ಯತೆಗಳು ಕಡಿಮೆ.  ಬಿ.ಎಸ್.ಯಡಿಯೂರಪ್ಪನವರು ಸ್ವಂತ ಪಕ್ಷ ಕಟ್ಟಿದಾಗ ಆಧಾರಸ್ತಂಭಗಳಾಗುತ್ತಾರೆಂದು ನಿರೀಕ್ಷಿಸಿದ್ದ ಸಂಪನ್ಮೂಲಭರಿತ ನಾಯಕರೆಲ್ಲರೂ ಜತೆಯಲ್ಲಿ ಉಳಿದುಕೊಂಡಿದ್ದರೆ ಆಟ ಬದಲಾಗುತ್ತಿತ್ತು.
ಕೊನೆಗಳಿಗೆಯ ವರೆಗೆ ಜತೆಯಲ್ಲಿದ್ದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ಉಮೇಶ್ ಕತ್ತಿಯವರು ಕೈಕೊಟ್ಟದ್ದು ಕೆಜೆಪಿಗೆ ದೊಡ್ಡ ಹೊಡೆತ. ಇದರಿಂದಾಗಿ ಕೆಜೆಪಿಯ  ಬಲ ಬಿಜೆಪಿಯನ್ನು ಸೋಲಿಸಲು ವ್ಯಯವಾಗಬಹುದೇ ಹೊರತು ಹೆಚ್ಚಿನ ಸಂಖ್ಯೆಯ ಶಾಸಕರನ್ನು ವಿಧಾನಸಭೆಗೆ ಕಳುಹಿಸಲು  ನೆರವಾಗಲಾರದು. ಇಲ್ಲಿಯೂ ಇಬ್ಬರ ನಡುವಿನ ಜಗಳದ    ಆದಾಯ ತಮಗೆ ಆಗಬಹುದೆಂಬ ನಿರೀಕ್ಷೆಯಲ್ಲಿದೆ ಕಾಂಗ್ರೆಸ್. ಇದರಿಂದಾಗಿ ಕಳೆದ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸಂಖ್ಯೆ ಅದಲುಬದಲಾದರೂ ಆಶ್ಚರ್ಯ ಪಡಬೇಕಾಗಿಲ್ಲ.

Tuesday, April 30, 2013

`ಕಾಂಗ್ರೆಸ್ ನಾಯಕರಿಗೂ ತಮ್ಮ ತಪ್ಪಿನ ಅರಿವಾಗುತ್ತಿದೆ'

ಗುಲ್ಬರ್ಗ: `ನಮ್ಮಿಂದಾಗಿಯೇ ಬಿಜೆಪಿ 35 ಸೀಟುಗಳನ್ನು ಕಳೆದುಕೊಳ್ಳಲಿದೆ, ಉಳಿದ ಕಡೆ ಅದು ಸೋಲುವುದು ಇದ್ದೇ ಇದೆ. ಕಾಂಗ್ರೆಸ್ 75 ದಾಟುವುದಿಲ್ಲ, ಜೆಡಿಎಸ್ 25 ತಲುಪಿ
ದರೆ ಹೆಚ್ಚು. ಉಳಿದಂತೆ ನಮ್ಮ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆಯನ್ನು ನೀವೇ ಊಹಿಸಿಕೊಳ್ಳಿ' ಎಂದು ಹೇಳುತ್ತಲೇ ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೈಯಲ್ಲಿದ್ದ ಚೀಟಿಯನ್ನು ಅಂಗಿಯ ಕಿಸೆಗೆ ತುರುಕಿಸಿದರು. ಪ್ರಕಟಿಸಬಾರದೆಂಬ ಷರತ್ತಿನಲ್ಲಿ ನೋಡಲು ಕೊಟ್ಟ ಆ ಚೀಟಿಯಲ್ಲಿ ಕೆಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ ಎಂದು ಅವರು ಬಲವಾಗಿ ನಂಬಿರುವ ಕ್ಷೇತ್ರಗಳ ಸಂಖ್ಯೆ ಮತ್ತು ಹೆಸರುಗಳಿದ್ದವು.
`ಫಲಿತಾಂಶ ಪ್ರಕಟವಾಗುವ ದಿನ ನಾನು ಹೇಳಿದ ಸತ್ಯ ನಿಮಗೆ ಗೊತ್ತಾಗುತ್ತದೆ. ಆಗ ನಿಮ್ಮ ಮತ್ತು ನನ್ನ ಪಟ್ಟಿ ತಾಳೆ ನೋಡುವಾ' ಎಂದು ಸವಾಲೆಸೆದ ಅವರ ಮುಖದಲ್ಲಿ ಎಂದಿನ ಆತ್ಮವಿಶ್ವಾಸ ಇತ್ತು.
ಗುಲ್ಬರ್ಗ ನಗರದಲ್ಲಿ ರಾತ್ರಿ ಚುನಾವಣಾ ಪ್ರಚಾರ ನಡೆಸಿ ತಡರಾತ್ರಿ ಹೊಟೇಲ್‌ನಲ್ಲಿ ಬಂದು ಉಳಿದುಕೊಂಡಿದ್ದ ಯಡಿಯೂರಪ್ಪ ಬೆಳಿಗ್ಗೆ ಎಂಟು ಗಂಟೆ ಹೊತ್ತಿಗೆ ಎದ್ದು ಹೆಲಿಕಾಪ್ಟರ್ ಹತ್ತಲು ರೆಡಿಯಾಗಿ ಕೂತಿದ್ದರು. ಈ ಅವಸರದಲ್ಲಿಯೇ ಬಿಡುವು ಮಾಡಿಕೊಂಡು `ಪ್ರಜಾವಾಣಿ' ಜತೆ ಮಾತನಾಡಿದರು.
 ಪ್ರ: ನೀವು ಹೇಳಿದ ಲೆಕ್ಕವನ್ನು ನಂಬಿದರೆ ನಿಮ್ಮ ಪಕ್ಷ ಸ್ವಂತಬಲದಿಂದ ಅಧಿಕಾರಕ್ಕೆ ಬರುವುದು ಸಾಧ್ಯ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾರ ಜತೆ ಸೇರಿಕೊಳ್ಳುತ್ತೀರಿ? ಬಿಜೆಪಿ? ಕಾಂಗ್ರೆಸ್? ಜೆಡಿಎಸ್?
ಬಿಜೆಪಿ ಜತೆ ಹೋಗುವ ಪ್ರಶ್ನೆಯೇ ಇಲ್ಲ. ಆ ಪಕ್ಷದ ನಾಯಕರು ನಮ್ಮ ಮತದಾರರನ್ನು ಹಾದಿ ತಪ್ಪಿಸಲು ಈ ರೀತಿಯ ವದಂತಿಗಳನ್ನು ಹರಡು ತ್ತಿದ್ದಾರೆ. ಸುಷ್ಮಾ ಸ್ವರಾಜ್ ಅವರೇ ಮೊನ್ನೆ ಈ ರೀತಿ ಹೇಳಿದ್ದರು. ಆ ಪಕ್ಷದಲ್ಲಿ ಒಂದಷ್ಟು ನನ್ನ ಹಿತೈಷಿಗಳಿರು ವುದು ನಿಜ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಭಾನು ವಾರ ರಾಜ್ಯದಲ್ಲಿ ಮಾಡಿದ್ದ ಪ್ರಚಾರ ಭಾಷಣ ದಲ್ಲಿ ಕೂಡಾ ನನ್ನ ಹೆಸರನ್ನೆತ್ತಿ ಟೀಕಿಸಿಲ್ಲ ಎನ್ನುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಕೆಲವು ನಾಯಕರು ನನ್ನನ್ನು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಂಪರ್ಕಿಸುತ್ತಿರುವುದು ನಿಜ. ಆದರೆ ಬಿಜೆಪಿ ನನ್ನ ಬದುಕಿನಲ್ಲಿ ಮುಗಿದ ಅಧ್ಯಾಯ. ಇನ್ನು ವಿಶ್ವಾಸದ್ರೋಹ ಮಾಡಿದ ಜೆಡಿಎಸ್ ಜತೆ ಈ ಜನ್ಮದಲ್ಲಿ ಸೇರುವುದಿಲ್ಲ. ಅನುಭವದಿಂದ ಅಷ್ಟು ಪಾಠವನ್ನು ಕಲಿಯದಿದ್ದರೆ ಹೇಗೆ?
ಪ್ರ: ಕಾಂಗ್ರೆಸ್?
ಈ ಚುನಾವಣೆ ನಡೆಯುತ್ತಿರುವುದೇ ನಮ್ಮ ಪಕ್ಷ ಮತ್ತು ಕಾಂಗ್ರೆಸ್ ನಡುವೆ. ಹೊಂದಾಣಿಕೆ ಮಾಡಿಕೊಳ್ಳುವುದು ಎಲ್ಲಿ ಬಂತು? ಆದರೆ ಕಾಂಗ್ರೆಸ್ ನಾಯಕರಿಗೂ ತಮ್ಮ ತಪ್ಪಿನ ಅರಿವಾಗುತ್ತಿದೆ. ನನ್ನ ಮೇಲಿನ ಆರೋಪಗಳು ಬಿಜೆಪಿಯ ಕೆಲವು ನಾಯಕರು ಸೇರಿ ನನ್ನ ವಿರುದ್ಧ ಹೂಡಿದ್ದ ಸಂಚು ಎಂದು ನಿಧಾನವಾಗಿ ಅವರಿಗೆ ಅರ್ಥವಾಗುತ್ತಿದೆ. ನನ್ನನ್ನು ಎದುರುಹಾಕಿಕೊಂಡರೆ ರಾಜ್ಯದ ಒಂದು ದೊಡ್ಡ ಸಮುದಾಯದ ಅಸಮಾಧಾನಕ್ಕೆ ಈಡಾಗಬಹುದೆಂಬ ಭೀತಿಯೂ ಅವರಲ್ಲಿದೆ. ಇದಕ್ಕಾಗಿಯೇ ಅವರು ನನ್ನ ಬಗ್ಗೆ ಹೆಚ್ಚು ಮಾತನಾಡುತ್ತಿಲ್ಲ.
ಪ್ರ: ಇಷ್ಟೊಂದು ಆತ್ಮವಿಶ್ವಾಸದಿಂದ ಗೆಲ್ಲುವ ಅಭ್ಯರ್ಥಿಗಳ ಸಂಖ್ಯೆಯನ್ನು ಹೇಳುತ್ತಿದ್ದೀರಿ, ಇದಕ್ಕೆ ಆಧಾರ ಏನು?
ಜನರ ಮೇಲಿನ ನಂಬಿಕೆಯೇ ಆಧಾರ. ನಾನು ಮಾಡಿದ ಕೆಲಸಗಳೆಲ್ಲ ಜನರಿಗೆ ಗೊತ್ತು, ತಪ್ಪು-ಒಪ್ಪುಗಳ ಹಿಂದಿನ ಸತ್ಯ ಏನು ಎನ್ನುವುದನ್ನೂ ನಿಧಾನವಾಗಿ ಅವರು ತಿಳಿದುಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಮ್ಮ ಪಕ್ಷಕ್ಕೆ ಇರುವ ಬೆಂಬಲವನ್ನು ನೀವೇ ಕಣ್ಣಾರೆ ನೋಡಿದ್ದೀರಿ. ಇದೇ ರೀತಿ ಮುಂಬೈ ಕರ್ನಾಟಕದಲ್ಲಿಯೂ ಇದೆ. ಹಳೆಮೈಸೂರಿನಲ್ಲಿ ಜೆಡಿಎಸ್‌ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡಲಿದ್ದೇವೆ.
ಪ್ರ: ನಿಮ್ಮ ಶಕ್ತಿ ಎಂದು ಹೇಳಿಕೊಳ್ಳುತ್ತಿರುವ ನಿಮ್ಮ ನಂಬಿಕೆಯೇ ನಿಮ್ಮ ದೌರ್ಬಲ್ಯ ಎಂದು ಈಗಲೂ ಅನಿಸುವುದಿಲ್ಲವೇ? ಸ್ವಂತ ಪಕ್ಷ ರಚಿಸಿದಾಗ ನಿಮ್ಮನ್ನು ಬೆಂಬಲಿಸಬಹುದೆಂದು ನೀವು ನಂಬಿದವರಲ್ಲಿ ಹೆಚ್ಚಿನವರು ಯಾರೂ ನಿಮ್ಮ ಜತೆಯಲ್ಲಿಲ್ಲ. ಇದು ನಿಮ್ಮ ನಂಬಿಕೆಯ ದೋಷ ಅಲ್ಲವೇ?
ಕೆಲವು ನಾಯಕರು ನಾನಿಟ್ಟ ನಂಬಿಕೆಗೆ ದ್ರೋಹ ಬಗೆದದ್ದು ನಿಜ, ಆದರೆ  ಜನ ಹಾಗೆ ಮಾಡಲಾರರು.
ಪ್ರ: ಯಾವ ರೀತಿಯ ದ್ರೋಹ?
ಅವರ ಹೆಸರು ಹೇಳಲು ನನಗಿಷ್ಟ ಇಲ್ಲ, ಅದು ನಿಮಗೂ ಗೊತ್ತಿದೆ. ನನ್ನ ಜತೆಯಲ್ಲಿಯೇ ಇದ್ದವರಂತೆ ನಟಿಸುತ್ತಿದ್ದ ಅವರು ಬಿಜೆಪಿಯಲ್ಲಿದ್ದ ನನ್ನ ವಿರೋಧಿಗಳ ಜತೆ ಷಾಮೀಲಾಗಿದ್ದರು ಎನ್ನುವುದು ನನಗೆ ತಿಳಿಯಲೇ ಇಲ್ಲ. ಅವರೆಲ್ಲ ಕೊನೆ ಗಳಿಗೆಯಲ್ಲಿ ತೀರ್ಮಾನ ಕೈಗೊಂಡು ಬಿಜೆಪಿಯಲ್ಲಿಯೇ ಉಳಿದವರಲ್ಲ. ಈ ಸಂಚನ್ನು ಸಾಕಷ್ಟು ಪೂರ್ವದಲ್ಲಿಯೇ ಪರಸ್ಪರ ಕೂಡಿ ಮಾಡಿದ್ದರು. ಪಕ್ಷಕ್ಕೆ ರಾಜೀನಾಮೆ ಕೊಡುವುದನ್ನು ವಿಳಂಬ ಮಾಡಿಸಿದ್ದು ಕೂಡಾ ಇದೇ ಸಂಚಿನ ಭಾಗ. ಇದೆಲ್ಲ ನನಗೆ ಗೊತ್ತಾಗಲಿಲ್ಲ. ಅವರಿಗಿರುವ ವಕ್ರಬುದ್ಧಿ ನನಗಿಲ್ಲ, ನನ್ನದೇನಿದ್ದರೂ ನೇರಾನೇರ ರಾಜಕೀಯ.
ಪ್ರ: ಯಾವಾಗ ಪಕ್ಷ ಬಿಡುವ ಯೋಜನೆ ಇತ್ತು ನಿಮಗೆ?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣವೇ ಆ ಪಕ್ಷ ಬಿಟ್ಟು ಹೊರಗೆ ಬರಬೇಕಾಗಿತ್ತು. ಆಗ ಹೊಸ ಪಕ್ಷ ಕಟ್ಟಲು ಸಮಯ ಸಿಗುತ್ತಿತ್ತು. ಆ ರೀತಿ ಮಾಡಿದರೆ ನಾನು ಬಲಿಷ್ಠನಾಗುತ್ತೇನೆ ಎಂದು ತಿಳಿದ ಬಿಜೆಪಿ ನಾಯಕರು ನಾನು ನಂಬಿದವರನ್ನೇ ಜತೆಯಲ್ಲಿಟ್ಟುಕೊಂಡು ಹಾದಿ ತಪ್ಪಿಸಿದರು. ದೆಹಲಿಯ ನಾಯಕರು ಸಂಧಾನ ನಡೆಸಿದರು, ಮುಂಬೈಯಲ್ಲಿ ನಡೆದ ಪಕ್ಷದ ಅಧಿವೇಶನಕ್ಕೆ ಕರೆಸಿಕೊಂಡರು. ಇವೆಲ್ಲವೂ ನಾನು ಹೊರಗೆ ಹೋಗುವುದನ್ನು ವಿಳಂಬ ಮಾಡಲು ಬಿಜೆಪಿ ಮಾಡಿದ ಸಂಚು ಎಂದು ನನಗೆ ತಿಳಿಯಲಿಲ್ಲ. ಆಗ ನನ್ನ ಜತೆಯಲ್ಲಿದ್ದವರಿಗೆ ಇದು ಗೊತ್ತಿದ್ದರೂ ಅದನ್ನು ನನಗೆ ತಿಳಿಸಲಿಲ್ಲ. ಅವರನ್ನು ನಂಬಿ ಮೋಸಹೋದೆ. ಅವರಿಗೆ ಒಳ್ಳೆಯದಾಗಲಿ.
ಪ್ರ: ನೀವು  ಅಧಿಕಾರದಲ್ಲಿದ್ದಾಗ ವೀರಶೈವ ಮಠಗಳಿಗೆ ಧಾರಾಳವಾಗಿ ದುಡ್ಡು ಕೊಟ್ಟವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಾಯ ಎದುರಾದಾಗ ಕೆಲವು ಸ್ವಾಮಿಗಳು ಬೀದಿಗೆ ಇಳಿದು ಪ್ರತಿಭಟನೆಯನ್ನೂ ನಡೆಸಿದ್ದರು. ಅವರಲ್ಲಿ ಯಾರೊಬ್ಬರೂ ಈಗ ನಿಮ್ಮನ್ನು ಬಹಿರಂಗವಾಗಿ ಬೆಂಬಲಿಸುತ್ತಿಲ್ಲವಲ್ಲಾ? ಅಲ್ಲಿಯೂ ನೀವಿಟ್ಟ ನಂಬಿಕೆ ಹುಸಿಯಾಗಿ ಹೋಯಿತೇ?
ಬಹಿರಂಗವಾಗಿ ಹೇಳಿಕೆ ನೀಡದಿದ್ದ ಮಾತ್ರಕ್ಕೆ ಅವರು ನನ್ನನ್ನು ಬೆಂಬಲಿಸುತ್ತಿಲ್ಲ ಎಂದು ಹೇಳಲಾಗದು. ಕೆಲವು ಸ್ವಾಮೀಜಿಗಳ ಬಂಟರು ಬದಲಾಗಿರಬಹುದು ಅಷ್ಟೆ. ಸ್ವಾಮೀಜಿಗಳು ಮತ್ತು ಅವರ ಅನುಯಾಯಿಗಳು ನಮ್ಮ ಪಕ್ಷದ ಪರವಾಗಿದ್ದಾರೆ. ಅವರ ಆಶೀರ್ವಾದ ನನ್ನ ಮೇಲಿದೆ.
ಪ್ರ: ಈ ಚುನಾವಣೆಯ ನಂತರ ನಿಮ್ಮ ಪಕ್ಷದ ಭವಿಷ್ಯದ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ?
ಅಂತಿಮವಾಗಿ ನಾವು ರಾಷ್ಟ್ರಮಟ್ಟದಲ್ಲಿ ತೃತೀಯ ರಂಗದ ಜತೆ ಸೇರಿಕೊಳ್ಳುವವರು. ಈ ಬಗ್ಗೆ ಕೆಲವು ಪಕ್ಷಗಳ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅದರ ವಿವರವನ್ನು ಈಗ ಬಹಿರಂಗಪಡಿಸುವುದು ಸರಿಯಾಗುವುದಿಲ್ಲ. ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗಿ ಅವರ ಜತೆ ಮಾತುಕತೆ ನಡೆಸುತ್ತೇನೆ. ನಮ್ಮದು ಒಂದು ಚುನಾವಣೆಯ ಪಕ್ಷ ಅಲ್ಲ, ಇದು ಯಡಿಯೂರಪ್ಪನಿಗೆ ಅನ್ಯಾಯವಾಗಿದೆ ಎಂಬ ಕಾರಣಕ್ಕಾಗಿ ಹುಟ್ಟಿಕೊಂಡ ಪಕ್ಷ ಅಲ್ಲ. ಅದೊಂದು ನೆಪ ಅಷ್ಟೆ. ರಾಜ್ಯಕ್ಕೆ ಆಗಿರುವ ಮತ್ತು ಆಗಲಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ.

Monday, April 29, 2013

ಹೈದರಾಬಾದ್ ಕರ್ನಾಟಕದ ಬಾಗಿಲು ಬಡಿಯುತ್ತಿರುವ ಕೆಜೆಪಿ

ಗುಲ್ಬರ್ಗ:   ಹೈದರಾಬಾದ್ ಕರ್ನಾಟಕ ಭಾಗದಲ್ಲಿ ರಾಜಕೀಯವಾಗಿ ನೇಪಥ್ಯಕ್ಕೆ ಸರಿಯುತ್ತಿರುವ ಲಿಂಗಾಯತರು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಮೂಲಕ ರಾಜಕೀಯ ನೆಲೆಯನ್ನು ಮರಳಿ ಪಡೆಯುವ ಪ್ರಯತ್ನದಲ್ಲಿದ್ದಾರೆಯೇ? ರಾಜಕೀಯವಾಗಿ ಅವಕಾಶ ವಂಚಿತರಾಗುತ್ತಿದ್ದೇವೆ ಎಂಬ ಈ ಭಾಗದ ಲಿಂಗಾಯತ ಸಮುದಾಯದಲ್ಲಿರುವ ಅತೃಪ್ತಿಯನ್ನು ಬಳಸಿಕೊಂಡು ಕೆಜೆಪಿ ಇಲ್ಲಿ ಕಾಲೂರುವ ಸನ್ನಾಹದಲ್ಲಿ ತೊಡಗಿದೆಯೇ? ಇಲ್ಲಿನ ಚುನಾವಣಾ ರಾಜಕೀಯದ ವಿದ್ಯಮಾನಗಳ ಒಳಗೊಂದು ನೋಟ ಹರಿಸಿದರೆ ಇಂತಹ ಪ್ರಶ್ನೆಗಳು ಸಹಜವಾಗಿಯೇ ಮೂಡುತ್ತವೆ.
ಈ ಭಾಗದ ಹಿರಿಯ ರಾಜಕಾರಣಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ನಂತರ ತಮ್ಮನ್ನು ಪ್ರತಿನಿಧಿಸಬಲ್ಲ ಸಮರ್ಥ ನಾಯಕರು ಹುಟ್ಟಿಬರಲಿಲ್ಲ ಎಂಬ ಕೊರಗು ಇಲ್ಲಿನ ಲಿಂಗಾಯತ ಸಮುದಾಯದಲ್ಲಿ ಬಹಳ ಕಾಲದಿಂದಲೂ ಇದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ಎಂಬ ಅವಳಿ ನಾಯಕರು ಈ ಪ್ರದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಲಿಂಗಾಯತೇತರ ಸಮುದಾಯದ ಬೆಂಬಲದೊಂದಿಗೆ ಪ್ರಭಾವಶಾಲಿ ಕಾಂಗ್ರೆಸ್ ನಾಯಕರಾಗಿ ಬೆಳೆಯುತ್ತಾ ಹೋದಂತೆ ಲಿಂಗಾಯತರು ಸಹಜವಾಗಿಯೇ ಪಕ್ಕಕ್ಕೆ ಸರಿದು ನಿಲ್ಲಬೇಕಾಯಿತು.
ನಾಯಕತ್ವದ ಈ ನಿರ್ವಾತವನ್ನು ಬಳಸಿಕೊಳ್ಳಲು ರಾಮಕೃಷ್ಣ ಹೆಗಡೆಯವರು ಹೊರಟಾಗ ಲಿಂಗಾಯತರು ಹೆಚ್ಚುಕಡಿಮೆ ಅವರ ನಾಯಕತ್ವವನ್ನು ಒಪ್ಪಿಕೊಂಡೇ ಬಿಟ್ಟಿದ್ದರು. ಅದರ ನಂತರ ಕಾಣಿಸಿಕೊಂಡವರು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ. ಇವರನ್ನು ಈ ಭಾಗದ ಲಿಂಗಾಯತರು ಬೆಂಬಲಿಸಿರುವುದಕ್ಕೆ 2008ರ ವಿಧಾನಸಭಾ ಚುನಾವಣಾ ಫಲಿತಾಂಶ ಸಾಕ್ಷಿ. ಆಶ್ಚರ್ಯದ ಸಂಗತಿಯೆಂದರೆ ಆ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಅಭ್ಯರ್ಥಿಗಳ ಜಾತಿಯನ್ನು ನೋಡದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಏಕೈಕ ಗುರಿಯಿಂದ ಲಿಂಗಾಯತೇತರ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿರುವುದು ಫಲಿತಾಂಶದ ವಿಶ್ಲೇಷಣೆಯಿಂದ ಕಂಡುಬರುತ್ತದೆ.
ಕಳೆದ ಚುನಾವಣೆಯಲ್ಲಿ ಗುಲ್ಬರ್ಗ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಯಲ್ಲಿ ಬರುವ ನಲ್ವತ್ತು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಹತ್ತೊಂಬತ್ತನ್ನು ಗೆದ್ದಿದ್ದರೂ, ಇವರಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರು ಐದು ಶಾಸಕರು ಮಾತ್ರ. ಉಳಿದವರೆಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗೆ ಸೇರಿದವರು. ಕಾಂಗ್ರೆಸ್ ಪಕ್ಷ ಈ ಭಾಗದ 15 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದರೂ ಅವರಲ್ಲಿನ ಲಿಂಗಾಯತ ಶಾಸಕರ ಸಂಖ್ಯೆ ಬಿಜೆಪಿಗಿಂತ ಎರಡು ಹೆಚ್ಚು. ಲಿಂಗಾಯತೇತರ ಅಭ್ಯರ್ಥಿಗಳಿದ್ದ ಕ್ಷೇತ್ರಗಳಲ್ಲಿಯೂ ಲಿಂಗಾಯತರು ಬಿಜೆಪಿಗೆ ಮತದಾನ ಮಾಡಿರುವುದು ಇದರಿಂದ ಸ್ಪಷ್ಟ.
ಜನಪ್ರಿಯ ಜಾತಿ ನಾಯಕರಲ್ಲಿ ಕಾಣಬಹುದಾದ (ಉದಾಹರಣೆಗೆ ಮಾಯಾವತಿ) ಮತವರ್ಗಾವಣೆಯ ಸಾಮರ್ಥ್ಯವನ್ನು ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಪ್ರದರ್ಶಿಸಿದ್ದಾರೆ. ಆದರೆ ಕೇವಲ ಈ ಶಕ್ತಿಯ ಬಲದಿಂದ ಕೆಜೆಪಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವೇ ಎನ್ನುವುದು ಪ್ರಶ್ನೆ. ಯಡಿಯೂರಪ್ಪ ಬಿಜೆಪಿಯಲ್ಲಿದ್ದಾಗ ಅವರ ವೈಯಕ್ತಿಕ ಜನಪ್ರಿಯತೆ (ಮುಖ್ಯವಾಗಿ ಜಾತಿ) ಮತ್ತು ಪಕ್ಷದ ಮೂಲಕ ಹರಿದು ಬಂದ ಬೆಂಬಲ ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿತ್ತು. ಆದರೆ ಈ ಬಾರಿ ಕೇವಲ ತನ್ನ ಜನಪ್ರಿಯತೆಯ ಬಲದಿಂದಲೇ ಪಕ್ಷದ ಅಭ್ಯರ್ಥಿಗಳನ್ನು ಆರಿಸಿ ತರಬೇಕಾಗಿದೆ. ಹಿಂದಿನ ಚುನಾವಣೆಯ ಕಾಲದಲ್ಲಿದ್ದ ಮತವರ್ಗಾವಣೆಯ ಸಾಮರ್ಥ್ಯ ಈಗಲೂ ಯಡಿಯೂರಪ್ಪನವರಲ್ಲಿ ಉಳಿದಿದೆಯೇ?
ಆರೋಪಗಳ ಕಳಂಕದ ಹೊರತಾಗಿಯೂ ಹೈದರಾಬಾದ್ ಕರ್ನಾಟಕದ ಬಹುಸಂಖ್ಯಾತ ಲಿಂಗಾಯತರಲ್ಲಿ ಯಡಿಯೂರಪ್ಪನವರ ಬಗ್ಗೆ ಪ್ರೀತಿಯೋ, ಅನುಕಂಪವೋ ಇರುವುದು ಸ್ಪಷ್ಟ. ಆದರೆ ಈ ಮೃದು ಭಾವನೆ ಅವರ ಮತಾಧಿಕಾರವನ್ನು ನಿರ್ದೇಶಿಸುವಷ್ಟು ಪ್ರಭಾವಶಾಲಿಯಾಗಿದೆಯೇ ಎಂಬುದನ್ನು ಕಾದು ನೋಡಬೇಕು. ಈ ಭಾಗದಲ್ಲಿ ಸಮಗ್ರ ಲಿಂಗಾಯತ ಜಾತಿಯನ್ನು ಪ್ರತಿನಿಧಿಸಬಲ್ಲ ಸಾಮರ್ಥ್ಯದ ನಾಯಕರು ಇಲ್ಲದಿರುವುದು ಕೂಡಾ ಯಡಿಯೂರಪ್ಪನವರ ಬಗೆಗಿನ ಅಭಿಮಾನಕ್ಕೆ ಕಾರಣ ಇರಬಹುದು.
ಗುಲ್ಬರ್ಗ ಜಿಲ್ಲೆಯಲ್ಲಿ ವೀರೇಂದ್ರ ಪಾಟೀಲರ ನಂತರ ಕಾಣಿಸಿಕೊಂಡವರು ಜನತಾ ಪರಿವಾರಕ್ಕೆ ಸೇರಿರುವ ವೈಜನಾಥ ಪಾಟೀಲ, ಎಸ್.ಕೆ.ಕಾಂತಾ, ಬಿ.ಆರ್.ಪಾಟೀಲ ಮೊದಲಾದ ನಾಯಕರು. ಇವರಲ್ಲಿ ಯಾರೂ ಲಿಂಗಾಯತ ನಾಯಕರಾಗಿ ತಮ್ಮನ್ನು ಬಿಂಬಿಸಿಕೊಂಡವರಲ್ಲ. ಗುಲ್ಬರ್ಗ ಜಿಲ್ಲೆಯ ಸೇಡಂ ಶಾಸಕ ಡಾ.ಶರಣಪ್ರಕಾಶ ಪಾಟೀಲ ಇಲ್ಲವೆ ಯಾದಗಿರಿ ಶಾಸಕ ಡಾ.ಮಾಲಕರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷ ತಮ್ಮಲ್ಲಿರುವ ಲಿಂಗಾಯತ ನಾಯಕರೆಂದು ಬಿಂಬಿಸುತ್ತಿದ್ದರೂ ಅವರ ಪ್ರಭಾವಲಯ ಸೀಮಿತವಾದುದು.
ಇದೇ ರೀತಿ ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಭೀಮಣ್ಣ ಖಂಡ್ರೆ ವೀರಶೈವ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರೂ ಸಮುದಾಯದ ಮೇಲೆ ನಿಯಂತ್ರಣ ಹೊಂದಿದವರಲ್ಲ, ಅವರ ಶ್ರಮವೆಲ್ಲ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಗ ಈಶ್ವರ ಖಂಡ್ರೆಯವರನ್ನು ಗೆಲ್ಲಿಸುವುದಕ್ಕಷ್ಟೇ ವ್ಯಯವಾಗುತ್ತಿದೆ. ಅದೇ ಜಿಲ್ಲೆಯ ಗುರುಪಾದಪ್ಪ ನಾಗಮಾರಪಳ್ಳಿ ಹಲವು ಪಕ್ಷಗಳನ್ನು ಸುತ್ತಿ ಈಗ ಕೆಜೆಪಿ ಸೇರಿದ್ದಾರೆ.
ಕೊಪ್ಪಳ ಜಿಲ್ಲೆಯ ಬಸವರಾಜ ಪಾಟೀಲ ಅನ್ವರಿ ಈಗ ಹಿಂದಿನ ಜನಪ್ರಿಯತೆಯನ್ನು ಉಳಿಸಿಕೊಂಡಿಲ್ಲ. ಆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಬಸವರಾಜ ರಾಯರೆಡ್ಡಿ ಮತ್ತು ಅಮರೇಗೌಡ ಬಯ್ಯಾಪುರ ಹಾಗೂ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ತಮ್ಮ ಕ್ಷೇತ್ರಗಳ ವ್ಯಾಪ್ತಿಯನ್ನು ಮೀರಿ ಲಿಂಗಾಯತ ಮತದಾರರ ಮೇಲೆ ಹಿಡಿತ ಹೊಂದಿದವರಲ್ಲ.
ಏಳರಲ್ಲಿ ಐದು ಕ್ಷೇತ್ರಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾಗಿರುವುದರಿಂದ ರಾಯಚೂರು ಜಿಲ್ಲೆಯಲ್ಲಿ ಲಿಂಗಾಯತ ನಾಯಕರು ಬೆಳೆಯಲು ಅವಕಾಶ ಕಡಿಮೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಬೋಸರಾಜು ಮತ್ತು ಹಂಪನಗೌಡ ಬಾದರ್ಲಿ ಅವರೇ ಅಲ್ಲಿನ ನಾಯಕರು. ಬಳ್ಳಾರಿ ಜಿಲ್ಲೆಯಲ್ಲಿದ್ದ ಒಬ್ಬ ಲಿಂಗಾಯತ ನಾಯಕರಾದ ಅಲ್ಲಂ ವೀರಭದ್ರಪ್ಪನವರು ಊರು ಬಿಟ್ಟು ಬೆಂಗಳೂರು ಸೇರಿಬಿಟ್ಟಿದ್ದಾರೆ.
ಹೈದರಾಬಾದ್ ಕರ್ನಾಟಕದ ಲಿಂಗಾಯತರಲ್ಲಿರುವ ನಾಯಕತ್ವದ ಕೊರತೆ ಬಿ.ಎಸ್.ಯಡಿಯೂರಪ್ಪನವರಿಗೆ ಇರುವ ಅನುಕೂಲತೆ. ಇದನ್ನು ಅರ್ಥಮಾಡಿಕೊಂಡಿರುವ ಅವರು ಅಳಿದುಳಿದ ಲಿಂಗಾಯತ ನಾಯಕರನ್ನು  ತಮ್ಮ ಜತೆ ಸೇರಿಸಿಕೊಳ್ಳುವ ಪ್ರಯತ್ನವನ್ನು ಪ್ರಾರಂಭದಿಂದಲೇ ಮಾಡುತ್ತಾ ಬಂದಿದ್ದಾರೆ. ಈ ಪ್ರಯತ್ನದಲ್ಲಿ ಸ್ವಲ್ಪ ಯಶಸ್ಸನ್ನೂ ಕಂಡಿದ್ದಾರೆ. ಇದನ್ನು ಮುಖ್ಯವಾಗಿ ಹೈದರಾಬಾದ್ ಕರ್ನಾಟಕದ ಕೇಂದ್ರ ಸ್ಥಾನವಾದ ಗುಲ್ಬರ್ಗ ಜಿಲ್ಲೆಯಲ್ಲಿ ಕಾಣಬಹುದು. ನಂಜುಂಡಪ್ಪ ವರದಿಯ ಅನುಷ್ಠಾನದಿಂದ ಹಿಡಿದು ಸಂವಿಧಾನದ 371ನೇ ಕಲಂ ತಿದ್ದುಪಡಿಯವರೆಗಿನ ಹೈದರಾಬಾದ್ ಕರ್ನಾಟಕದ ಮುಖ್ಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಾ ಬಂದ ವೈಜನಾಥ ಪಾಟೀಲ, ಕಾರ್ಮಿಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಎಸ್.ಕೆ.ಕಾಂತಾ, ಜನತಾ ಪರಿವಾರದಿಂದ ಬಂದ ಸಮಾಜವಾದಿ ಹಿನ್ನೆಲೆಯ ಬಿ.ಆರ್.ಪಾಟೀಲ ಮತ್ತು ಇನ್ನೊಬ್ಬ ಹಿರಿಯ ನಾಯಕ ಎಂ.ವೈ. ಪಾಟೀಲ ಈಗ ಗುಲ್ಬರ್ಗ ಜಿಲ್ಲೆಯಲ್ಲಿ ಕೆಜೆಪಿ ಅಭ್ಯರ್ಥಿಗಳು. ಅದೇ ರೀತಿ ಕೊಪ್ಪಳ ಜಿಲ್ಲೆಯ ಬಸವರಾಜ ಅನ್ವರಿ, ಬೀದರ್ ಜಿಲ್ಲೆಯ ಗುರುಪಾದಪ್ಪ ನಾಗಮಾರಪಳ್ಳಿ ಕೂಡಾ ಕೆಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ತಮಗೆ ಇರುವ ಪ್ರಭಾವ ಸೀಮಿತವಾಗಿದ್ದರೂ ಇದು ಯಡಿಯೂರಪ್ಪನವರ ಜನಪ್ರಿಯತೆಯ ಜತೆ ಸೇರಿಕೊಂಡಾಗ ಗೆಲುವಿನ ಹಾದಿ ಹತ್ತಿರವಾಗಬಹುದು ಎಂಬ ನಿರೀಕ್ಷೆ ಕೆಜೆಪಿ ಅಭ್ಯರ್ಥಿಗಳಲ್ಲಿದೆ. ಕೆಜೆಪಿಯ ಜನಪ್ರಿಯತೆ ಅದಕ್ಕೆ ಸ್ಥಾನಗಳನ್ನು ಗೆದ್ದುಕೊಡುವಷ್ಟು ಅಗಾಧವಾಗಿದೆಯೇ? ಇಲ್ಲವೆ ಬೇರೆ ಪಕ್ಷಗಳ ಮತಗಳನ್ನು ತಿಂದುಹಾಕುವುದಕ್ಕಷ್ಟೇ ಸೀಮಿತವಾಗಲಿದೆಯೇ ಎನ್ನುವುದು ಚುನಾವಣಾ ಕಣದಲ್ಲಿರುವ ಕುತೂಹಲ. ಕೆಜೆಪಿ ಬರಿ ಬಿಜೆಪಿಗೆ ಮಾತ್ರವಲ್ಲ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಹಾನಿ ಉಂಟು ಮಾಡುವ ಸಾಧ್ಯತೆ ಇದ್ದರೂ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೆಜೆಪಿಯಿಂದ ನಷ್ಟಕ್ಕಿಂತ ಲಾಭವೇ ಹೆಚ್ಚು. ತಮ್ಮ ಅಭ್ಯರ್ಥಿಗಳು ಗೆಲ್ಲಲಾಗದ ಕಡೆಗಳಲ್ಲಿ ಕೊನೆ ಗಳಿಗೆಯಲ್ಲಿ ಕೆಜೆಪಿ ತನ್ನ ಬೆಂಬಲಿಗರಿಗೆ ಕಾಂಗ್ರೆಸ್ ಪರ ಮತಹಾಕಲು ಸೂಚನೆಯನ್ನು ನೀಡಬಹುದೆಂಬ ನಿರೀಕ್ಷೆಯೂ ಕೆಲವು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿದೆ.
ಬಹಿರಂಗವಾಗಿ ಚರ್ಚೆಯಾಗುತ್ತಿರುವಂತೆ ಬಿಜೆಪಿಯನ್ನು ಸೋಲಿಸುವುದೇ ಕೆಜೆಪಿಯ ಮೊದಲ ಉದ್ದೇಶವಾಗಿದ್ದರೆ ಈ ಪ್ರಯತ್ನದಲ್ಲಿ ಅದು ಈಗಾಗಲೇ ಯಶಸ್ಸು ಕಂಡಿದೆ ಎಂದು ಹೇಳಬಹುದು. ಹೈದರಾಬಾದ್ ಕರ್ನಾಟಕದಲ್ಲಿ ಕಳೆದ ಬಾರಿ ಗೆದ್ದಿರುವ 19 ಸ್ಥಾನ ಉಳಿಸಿಕೊಳ್ಳುವುದು ಬಿಜೆಪಿಗೆ ಖಂಡಿತ ಅಸಾಧ್ಯ. ಈ ಸಂಖ್ಯೆ ಅರ್ಧಕ್ಕಿಂತಲೂ ಕೆಳಗಿಳಿದರೂ ಅಚ್ಚರಿ ಪಡಬೇಕಾಗಿಲ್ಲ. ಕೆಜೆಪಿ, ಹೈದರಾಬಾದ್ ಕರ್ನಾಟಕದ ಮನೆಬಾಗಿಲು ಬಡಿಯುತ್ತಿರುವುದು ನಿಜ, ಆದರೆ ಬಾಗಿಲು ತೆರೆಯುವ ಬಗ್ಗೆ ಮನೆ ಯಜಮಾನನ ನಿರ್ಧಾರ ಏನೆಂದು ತಿಳಿದುಕೊಳ್ಳಲು ಕಾಯಬೇಕು.

Sunday, April 28, 2013

`ವಿಕಾಸ ಪುರುಷ'ನ ಹೊಸ ಪಾತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಚಾರ

ಗುಲ್ಬರ್ಗ:  `ನಮ್ಮ ಸಾಧನೆಯನ್ನು ಅರ್ಧ ಆಕಾಶದಲ್ಲಿ, ಇನ್ನರ್ಧ ಭೂಮಿಯಲ್ಲಿ ತೋರಿಸುತ್ತೇನೆ' ಎಂದಿದ್ದರು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಗುಲ್ಬರ್ಗದಲ್ಲಿ ಹೆಲಿಕಾಪ್ಟರ್ ಹತ್ತುವಾಗ. ಬೀದರ್ ಲೋಕಸಭಾ ಸದಸ್ಯ ಎನ್.ಧರ್ಮಸಿಂಗ್ ಅವರೂ ಜತೆಯಲ್ಲಿದ್ದರು.
ಬೆಳಿಗ್ಗೆ ಹತ್ತರಿಂದ ರಾತ್ರಿ ಹತ್ತರ ವರೆಗೆ ಎಡೆಬಿಡದೆ ಐದು ಸ್ಥಳಗಳಲ್ಲಿ ಪ್ರಚಾರ ಭಾಷಣ ಮಾಡಿದ ಇಬ್ಬರೂ ನಾಯಕರು ದಣಿವಿಲ್ಲದಂತೆ ಮಾತನಾಡಿದ್ದು ಹೈದರಾಬಾದ್ ಕರ್ನಾಟಕದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತ್ರ. ಸಭೆ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಬಂದು ಕೂತಾಗಲೂ ಅದೇ ಚರ್ಚೆ ಮುಂದುವರಿಯುತ್ತಿತ್ತು. `ಐದು ವರ್ಷಗಳಲ್ಲಿ ಖರ್ಗೆ ಮತ್ತು ಧರ್ಮಸಿಂಗ್ ಈ ಪ್ರದೇಶಕ್ಕೆ ಏನು ಮಾಡಿದ್ದಾರೆ?' ಎಂಬ ವಿರೋಧಪಕ್ಷಗಳ ಚುಚ್ಚು ಪ್ರಶ್ನೆ ಇಬ್ಬರನ್ನೂ ಘಾಸಿಗೊಳಿಸಿದಂತಿತ್ತು.
ಆಡಳಿತಾರೂಢ ಪಕ್ಷದ ದುರಾಡಳಿತವನ್ನೇ ಚುನಾವಣಾ ಕಾಲದಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರಚಾರದ ಪ್ರಮುಖ ವಿಷಯವನ್ನಾಗಿ ಮಾಡಿಕೊಳ್ಳುವುದು ಸಹಜ. ಹೈದರಾಬಾದ್ ಕರ್ನಾಟಕದಲ್ಲಿ ಚುನಾವಣಾ ಆಟದ ಈ ನಿಯಮ ಬದಲಾಗಿದೆ.
ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ  ಕಾಂಗ್ರೆಸ್‌ನ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಾಧನೆಗಳನ್ನು ಮುಂದಿಟ್ಟು ಮತಕೇಳುತ್ತಿದ್ದಾರೆ.`ದಲಿತ ನಾಯಕ', `ಉತ್ತರ ಕರ್ನಾಟಕದ ನಾಯಕ' ಎಂಬೀತ್ಯಾದಿ ವಿಶೇಷಣಗಳಿಂದ ಕಳಚಿಕೊಂಡು `ವಿಕಾಸ ಪುರುಷ'ನಾಗಿ ತಮ್ಮನ್ನು ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿ ಖರ್ಗೆ ತೊಡಗಿದ್ದಾರೆ.
`ಲೋಕಸಭೆಗೆ ನನ್ನನ್ನು ಆರಿಸಿ ಕಳುಹಿಸಿದರೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷಸ್ಥಾನಮಾನ ನೀಡಲು ಸಂವಿಧಾನದ 371ನೇ ಕಲಮಿಗೆ ತಿದ್ದುಪಡಿ ಮಾಡುವುದಾಗಿ ರಾಹುಲ್‌ಗಾಂಧಿ ಭರವಸೆ ನೀಡಿದ್ದರು. ನಾವು ನುಡಿದಂತೆ ನಡೆದಿದ್ದೇವೆ. ಮಾಡಿರುವ ಕೆಲಸಕ್ಕಾಗಿ ಕೂಲಿ ಕೊಡಿ' ಎಂದು ಖರ್ಗೆ ಅವರು ಮತಯಾಚಿಸುತ್ತಿದ್ದಾರೆ. ಅಲ್ಲಿಗೆ ನಿಲ್ಲಿಸದೆ, ನಾಲ್ಕು ವರ್ಷಗಳ ಅವಧಿಯಲ್ಲಿ  ಗುಲ್ಬರ್ಗ  ಜಿಲ್ಲೆಯಲ್ಲಿ ತಾವು ಮಾಡಿದ ಸಾಧನೆಗಳನ್ನು ಪಟ್ಟಿಮಾಡಿ ಹೇಳುತ್ತಿದ್ದರು.
`ಏನು ಮಾಡಿದ್ದಾರೆ ಎಂದು ಕೇಳುವವರು ಇಲ್ಲಿ ಬಂದು ಕಣ್ಣುಬಿಟ್ಟುನೋಡಲಿ, ಅಂದಾಜು ರೂ.1,500 ಕೋಟಿ  ವೆಚ್ಚದಲ್ಲಿ ಇಎಸ್‌ಐ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ, ವೈದ್ಯಕೀಯ, ಡೆಂಟಲ್,ನರ್ಸಿಂಗ್ ಕಾಲೇಜುಗಳು, ಕೇಂದ್ರೀಯ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಗುಲ್ಬರ್ಗಗಳಲ್ಲಿ ಕೌಶಲ ಸುಧಾರಣಾ ಕೇಂದ್ರ, ಟೆಕ್ಸ್‌ಟೈಲ್ ಪಾರ್ಕ್, ಕೃಷಿ ಸಂಶೋಧನಾ ಕೇಂದ್ರ, ನವೋದಯ ಶಾಲೆ...ಇನ್ನೇನಾಗಬೇಕು? ಗುಲ್ಬರ್ಗ, ರಾಯಚೂರು,ಯಾದಗಿರಿ,ಬಳ್ಳಾರಿ ಮತ್ತು ಅನಂತಪುರ ಮೂಲಕ ಬೆಂಗಳೂರಿಗೆ ಹೋಗುವ ಸುಮಾರು 300 ಕಿ.ಮೀ.ಉದ್ದದ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೂ ಇತ್ತೀಚೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಇವೆಲ್ಲವೂ ನಾಲ್ಕು ವರ್ಷಗಳಲ್ಲಿ ಆಗಿರುವಂತಹ ಕೆಲಸಗಳು, ಹಿಂದಿನದ್ದೆಲ್ಲವನ್ನು ಇದರಲ್ಲಿ ಸೇರಿಸಿಲ್ಲ. ನನ್ನನ್ನು ಸತತವಾಗಿ ಏಳು ಬಾರಿ ಆಯ್ಕೆಮಾಡಿದ ಗುರುಮಿಠ್ಕಲ್ ಕ್ಷೇತ್ರಕ್ಕೆ ಹೋಗಿ ನೋಡಿದರೆ ಅಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೇನೆಂದು ಗೊತ್ತಾಗುತ್ತದೆ.  ಕಾಮಾಲೆ ಕಣ್ಣಿಗೆ ಇದೆಲ್ಲ ಕಾಣಿಸುವುದಿಲ್ಲ' ಎಂದ ಖರ್ಗೆಯವರಿಗೆ ಭಾಷಣ ಮುಗಿಸಿದ ಮೇಲೆಯೂ ವಿರೋಧಪಕ್ಷಗಳ ನಾಯಕರ ಪ್ರಶ್ನೆಗಳಿಂದ ಹುಟ್ಟಿಕೊಂಡಿರುವ ಸಿಟ್ಟು ಇಳಿದಿರಲಿಲ್ಲ.
ಪಕ್ಷದ ಶಿಸ್ತಿನ ಶಿಪಾಯಿ: ಅವರ ಮಾತುಗಳನ್ನು ಅರ್ಧಕ್ಕೆ ತಡೆದು `ವಿರೋಧಪಕ್ಷಗಳನ್ನು ಯಾಕೆ ದೂರುತ್ತೀರಿ, ಬೆಂಗಳೂರಿನಲ್ಲಿರುವ ನಿಮ್ಮ ಪಕ್ಷದ ನಾಯಕರಲ್ಲಿ ಎಷ್ಟು ಮಂದಿ ಈ ಬಗ್ಗೆ ಮಾತನಾಡಿದ್ದಾರೆ?' ಎಂದು ಪ್ರಶ್ನಿಸಿದೆ. ಅಲ್ಲಿಯವರೆಗೆ ಆಕ್ರಮಣಕಾರಿ ರಾಜಕೀಯ ನಾಯಕರಂತೆ ಮಾತನಾಡುತ್ತಿದ್ದ ಖರ್ಗೆಯವರು ತಕ್ಷಣ `ಪಕ್ಷದ ಶಿಸ್ತಿನ ಸಿಪಾಯಿ'ಯಾಗಿ ಮೌನವಾಗಿಬಿಟ್ಟರು.
ಆಡಳಿತ ಮತ್ತು ವಿರೋಧಪಕ್ಷದ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದ ಅನುಭವವನ್ನು ಗಣನೆಗೆ ತೆಗೆದುಕೊಂಡರೆ ಪಕ್ಷಾತೀತವಾಗಿ ರಾಜ್ಯದ ಅತ್ಯಂತ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ. ಆದರೆ ಅದನ್ನು ಅವರು ಹೇಳಿಕೊಂಡದ್ದು ಕಡಿಮೆ.
`ಸಾಮಾನ್ಯವಾಗಿ ರಾಜಕಾರಣಿಗಳಲ್ಲಿ ಕಂಡುಬರುವ ಮಹತ್ವಾಕಾಂಕ್ಷೆ ಇಲ್ಲದಿರುವುದು ಮತ್ತು ಪಕ್ಷದ ಮೇಲಿನ ಅತಿನಿಷ್ಠೆ ಖರ್ಗೆ ಅವರ ದೌರ್ಬಲ್ಯಗಳು' ಎನ್ನುತ್ತಾರೆ ಅವರ ಬೆಂಬಲಿಗರು. ಇತ್ತೀಚೆಗೆ ಖರ್ಗೆ ಅವರನ್ನು ರಾಜಕೀಯ ಮಹತ್ವಾಕಾಂಕ್ಷೆಗಿಂತಲೂ ಹೆಚ್ಚಾಗಿ ಅಭಿವೃದ್ಧಿ ಕೆಲಸಗಳ ಹುಚ್ಚು ಆವರಿಸಿಕೊಂಡಂತಿದೆ.
ತಮ್ಮ ನಲ್ವತ್ತು ವರ್ಷಗಳ ರಾಜಕೀಯದಲ್ಲಿ ಮಾಡಲು ಸಾಧ್ಯವಾಗದೆ ಇರುವುದನ್ನೆಲ್ಲ ಆದಷ್ಟು ಬೇಗ ಮಾಡಿ ಮುಗಿಸುವ ಅವಸರದಲ್ಲಿದ್ದ ಹಾಗೆ ಕಾಣುತ್ತಿದ್ದಾರೆ. ರಾಜಕೀಯ ವಿಷಯದ ಮೂಲಕ ಅವರೊಡನೆ ಮಾತು ಪ್ರಾರಂಭಿಸಿದರೂ ಅದು ಬಹಳ ಬೇಗ ಅಭಿವೃದ್ಧಿ ಕಾರ್ಯಕ್ರಮಗಳ ಚರ್ಚೆಯ ತಿರುವು ಪಡೆಯುತ್ತಿತ್ತು.
ಗುಲ್ಬರ್ಗದಲ್ಲಿ ಹೆಲಿಕಾಪ್ಟರ್ ಆಕಾಶಕ್ಕೇರಿದ ಸ್ವಲ್ಪ ಹೊತ್ತಿನಲ್ಲಿಯೇ `ಇಲ್ಲಿ ಕೆಳಗೆ ನೋಡಿ' ಎಂದರು ಇಬ್ಬರೂ ನಾಯಕರು ಏಕಕಾಲಕ್ಕೆ. ಅಲ್ಲಲ್ಲಿ ನಿರ್ಮಾಣಗೊಂಡಿರುವ ಬ್ಯಾರೇಜ್‌ಗಳಿಂದಾಗಿ ಭೀಮಾ ನದಿಯಲ್ಲಿ ನೀರು ನಿಂತಿರುವುದು ಮತ್ತು ನದಿದಂಡೆಯಲ್ಲಿ ಹಸಿರು ನಳನಳಿಸುತ್ತಿರುವುದು ಎತ್ತರದಿಂದಲೂ ಸ್ಪಷ್ಟವಾಗಿ ಕಾಣುತ್ತಿತ್ತು.
ಭೀಮಾ, ಕಾಗಿನಾ, ಅಮರ್ಜಾ ನದಿದಂಡೆಗಳ ಮೇಲಿನ ಅಫ್ಜಲ್‌ಪುರ, ಜೇವರ್ಗಿ, ಶಹಬಾದ್, ಚಿಂಚೋಳಿ, ಮಾಗಾಂವ್‌ಗಳಲ್ಲಿಯೇ ಚುನಾವಣಾ ಪ್ರಚಾರದ ಸಭೆಗಳಿದ್ದ ಕಾರಣ ಹೆಲಿಕಾಪ್ಟರ್ ಈ ನದಿದಂಡೆಗಳ ಮೇಲಿನಿಂದಲೇ ಹಾರುತ್ತಿತ್ತು. ನದಿಗಳಲ್ಲಿ ನೀರು ಮತ್ತು ಹಸಿರು ನೋಡಿದಾಕ್ಷಣ ಇಬ್ಬರೂ ನಾಯಕರು `ಕೆಳಗೆ ನೋಡಿ' ಎಂದು ಹೇಳುತ್ತಲೇ ಇದ್ದರು.
`ಏನು ಮಾಡಿದ್ದಾರೆ ಎಂದು ಕೇಳುವವರಿಗೆ ಇದು ಯಾವುದು ಕಾಣುತ್ತಿಲ್ಲವೇ? ಈ ನದಿಗಳಿಗೆ ಸುಮಾರು 20-25 ಬ್ಯಾರೇಜ್ ನಿರ್ಮಿಸಲಾಗಿದೆ. ಇವುಗಳಿಗೆ ಕೇಂದ್ರ ಸರ್ಕಾರದ `ತ್ವರಿತ ನೀರಾವರಿ ಯೋಜನೆ'ಯಿಂದಲೇ ಹೆಚ್ಚಿನ ದುಡ್ಡು ಬಂದಿರುವುದು, ರಾಜ್ಯ ಸರ್ಕಾರ ಎಷ್ಟು ಕೊಟ್ಟಿದೆಯಂತೆ? ಪ್ರಶ್ನಿಸಿದರು ಧರ್ಮಸಿಂಗ್. `ನಮ್ಮ ಸಾಧನೆಯನ್ನು ಆಕಾಶದಲ್ಲಿ ತೋರಿಸುತ್ತೇನೆ' ಎಂದು ಹೇಳಿದ್ದೇ ಇದಕ್ಕಾಗಿ ಎಂದು ದನಿಗೂಡಿಸಿದರು ಖರ್ಗೆ.
ಹೆಲಿಕಾಪ್ಟರ್‌ನ ಮೊದಲ ನಿಲುಗಡೆಯಾಗಿ ಅಫ್ಜಲ್‌ಪುರದಲ್ಲಿ ಇಳಿದಾಗ ಎದುರಾದ ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಭೀಮಾ ನದಿ ದಂಡೆಯ ಬ್ಯಾರೇಜ್‌ಗಳ ವಿಷಯ ಬಿಟ್ಟು ಬೇರೇನೂ ಮಾತನಾಡಲಿಲ್ಲ.  `ಸೊನ್ನ, ಗಾಣಗಾಪುರ, ಗತ್ತರಗಿಗಳಲ್ಲಿ ನಿರ್ಮಾಣಗೊಂಡ ಬ್ಯಾರೇಜ್‌ಗಳಿಂದಾಗಿ ಸುಮಾರು 90ಗ್ರಾಮಗಳ ಜಮೀನಿಗೆ ನೀರು ಬಂದಿದೆ' ಎಂದು ಅವರು ಖರ್ಗೆ ಮತ್ತು ಧರ್ಮಸಿಂಗ್ ಅವರ ಮಾತುಗಳನ್ನು ದೃಡೀಕರಿಸಿದರು.
ಪ್ರಚಾರ ಸಭೆಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಲು ಪ್ರಾರಂಭಿಸುತ್ತಿದ್ದಂತೆಯೇ ಜನ ಜೈಕಾರ ಹಾಕತೊಡಗಿದ್ದರು. ಅವರು ಪ್ರತಿಬಾರಿ ಮುನ್ನೂರ ಎಪ್ಪತ್ತೊಂದು' ಹೇಳಿದಾಗಲೂ ಜನ ಹರ್ಷೋದ್ಗಾರ ಮಾಡುತ್ತಿದ್ದರು. ಸಭೆಯಲ್ಲಿ ಮಾತನಾಡುತ್ತಿದ್ದ ಇತರರು ಖರ್ಗೆ ಹೆಸರು ಹೇಳುತ್ತಿದ್ದಾಗಲೂ ಜನ ಜೈಕಾರ ಹಾಕುತ್ತಿದ್ದರು. ಇದರಿಂದ ಸ್ಪೂರ್ತಿ ಪಡೆದಂತೆ ಖರ್ಗೆ ಎಲ್ಲ ಕಡೆಗಳಲ್ಲಿ ಸಂವಿಧಾನದ 371ನೆ ಕಲಮಿಗೆ ಮಾಡಿದ ತಿದ್ದುಪಡಿಯ ವಿಷಯವನ್ನೇ ಪ್ರಚಾರದ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡು ಮಾತನಾಡಿದರು.
`ಸಂವಿಧಾನದ 371ನೇ ಕಲಮಿಗೆ ತಿದ್ದುಪಡಿ ಮಾಡುವುದನ್ನು ವಿರೋಧಿಸಿದವರು ಬಿಜೆಪಿ ನಾಯಕರು. ಇದನ್ನು ಮಾಡಿದರೆ ದೇಶ `ತುಕುಡಿ ತುಕುಡಿ' ಆಗುತ್ತದೆ ಎಂದು ಆಗಿನ ಕೇಂದ್ರ ಗೃಹಸಚಿವ ಎಲ್.ಕೆ.ಅಡ್ವಾಣಿ ಹೇಳಿದ್ದರು. ವಿಶೇಷ ಸ್ಥಾನಮಾನ ಪಡೆದ ತೆಲಂಗಾಣ, ವಿದರ್ಭ, ಸೌರಾಷ್ಟ್ರ, ನಾಗಲ್ಯಾಂಡ್‌ಗಳು `ತುಕುಡಿ' ಆಗಿದೆಯೇ? ಎಂದು ಅವರು ಜನರನ್ನು ಪ್ರಶ್ನಿಸುತ್ತಿದ್ದರು.
`ಬಹಳ ಶ್ರಮಪಟ್ಟು ಎಲ್ಲರನ್ನು ಒಪ್ಪಿಸಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ತಿದ್ದುಪಡಿ ಮಾಡಿದ್ದೇವೆ. ಇದು ಸರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ. ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಓಟು ಹಾಕಿ' ಎಂದು ಜನತೆಯ ಭಾವನೆಗಳನ್ನು ಮೀಟುವ ಕೆಲಸವನ್ನೂ ಅವರು ಮಾಡುತ್ತಿದ್ದರು.
ಚುನಾವಣಾ ಪ್ರಚಾರ ಸಭೆಗಳಲ್ಲಿ ಸಾಮಾನ್ಯವಾಗಿ ಒಂದು ಪಕ್ಷಕ್ಕೆ ಸೇರಿದ್ದ ಕಾರ್ಯಕರ್ತರು ಮತ್ತು ಬೆಂಬಲಿಗರೇ ಸೇರುವುದರಿಂದ ಪ್ರತಿಕ್ರಿಯೆ ನಿರೀಕ್ಷಿತ ಎಂದಿಟ್ಟುಕೊಂಡರೂ `ಅಭಿವೃದ್ಧಿಯ ಮಂತ್ರ'ಕ್ಕೆ ಜನ ತಲೆದೂಗುತ್ತಿರುವುದು ಹೊಸ ಬೆಳವಣಿಗೆ. ವೈಯಕ್ತಿಕ ಆರೋಪ-ಪ್ರತ್ಯಾರೋಪಗಳನ್ನು ಮೀರಿದ ಈ ರೀತಿಯ ಅಭಿವೃದ್ಧಿ ಕೇಂದ್ರಿತ ಚುನಾವಣಾ ಪ್ರಚಾರ ಈ ಕಾಲದ ಅಗತ್ಯ ಕೂಡಾ ಹೌದು.
ಮಾಗಾಂವ್‌ನಲ್ಲಿ ರಾತ್ರಿ ಹತ್ತುಗಂಟೆಗೆ ಪ್ರಚಾರ ಮುಗಿಸಿ ಗುಲ್ಬರ್ಗಕ್ಕೆ ಹಿಂದಿರುಗುತ್ತಿದ್ದಾಗ ಖರ್ಗೆ ಅವರು `ನಾವೇನು ಮಾಡಿದ್ದೇವೆ ಎನ್ನುವುದನ್ನು ಭೂಮಿಯ ಮೇಲೆಯೂ ನೋಡಿದರಲ್ಲಾ?' ಎಂದು ಕೇಳಿದರು. ಚಿಂಚೋಳಿ ಮೀಸಲು ಕ್ಷೇತ್ರದ ಕಾಳಗಿಗೆ ಹೋದ ನಂತರ ಹೆಲಿಕಾಪ್ಟರ್ ವಾಪಸು ಕಳಿಸಿದ್ದ ಕಾರಣ ರಸ್ತೆಯಿಂದಲೇ ಮಾಗಾಂವ್‌ಗೆ ಬಂದ ಖರ್ಗೆ ದಿನದ ಕೊನೆಯ ಪ್ರಚಾರ ಭಾಷಣ ಮುಗಿಸಿದ್ದರು.
`ಈ ವಯಸ್ಸಿನಲ್ಲಿ ಸತತ ಹನ್ನೆರಡು ಗಂಟೆ ಸುತ್ತಾಟ, ಪ್ರಚಾರ ಎಲ್ಲ ಸುಸ್ತು ಅನಿಸುವುದಿಲ್ಲವೇ? ಎಂದು ಖರ್ಗೆಯವರನ್ನು ಸುಮ್ಮನೆ ಕೆಣಕಿದೆ. `ನನಗೆ ವಯಸ್ಸಾಗಿದೆ ಎಂದು ನಿಮಗೆ ಅನಿಸುತ್ತಾ? ಎಂದು ಅವರು ಮರುಪ್ರಶ್ನಿಸಿದರು. `ಈ ಪ್ರಶ್ನೆಯನ್ನು ನೀವು ಕೇಳಬೇಕಾಗಿರುವುದು ನಿಮ್ಮ ಪಕ್ಷದ ಉಪಾಧ್ಯಕ್ಷರಾದ ರಾಹುಲ್‌ಗಾಂಧಿ ಅವರನ್ನು' ಎಂದೆ ತಮಾಷೆಯಾಗಿ.

Friday, April 26, 2013

ರಾಜ್ಯ ನಾಯಕತ್ವ ಕಳೆದುಕೊಳ್ಳಲಿರುವ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ:  ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾ ಬಂದ ಶಿವಮೊಗ್ಗ ಜಿಲ್ಲೆ ಈ ಬಾರಿಯ ವಿಧಾನಸಭಾ ಚುನಾವಣೆಯ ನಂತರ ಆ ಸ್ಥಾನವನ್ನು ಕಳೆದುಕೊಂಡರೆ ಆಶ್ಚರ್ಯ ಪಡಬೇಕಾಗಿಲ್ಲ. ನಾಲ್ವರು ಮುಖ್ಯಮಂತ್ರಿಗಳು ಮತ್ತು ಆಡಳಿತಾರೂಢ ಪಕ್ಷಕ್ಕೆ ಸಿಂಹಸ್ವಪ್ನರಾಗಿದ್ದ ಸಮಾಜವಾದಿ ನಾಯಕ ಶಾಂತ
ವೇರಿ ಗೋಪಾಲಗೌಡರನ್ನು ರಾಜ್ಯಕ್ಕೆ ನೀಡಿದ ಶಿವಮೊಗ್ಗ ಜಿಲ್ಲೆಯು ರಾಜಕೀಯ ನಾಯಕತ್ವದ ಓಟದಲ್ಲಿ ಸದಾ ಪೈಪೋಟಿ ಕೊಡುತ್ತ ಬಂದಿದೆ.
ಕಾಗೋಡು ಸತ್ಯಾಗ್ರಹ ಮತ್ತು ರೈತ ಚಳವಳಿಯ ಹಿನ್ನೆಲೆಯಿಂದಾಗಿ ರಾಜಕೀಯವಾಗಿ ಜಾಗೃತವಾಗಿದ್ದ ಜಿಲ್ಲೆಯೂ ಹೌದು. ಈ ವಿಶೇಷಣಗಳನ್ನೆಲ್ಲ ಹೊಂದಿದ್ದ ಜಿಲ್ಲೆಯ ರಾಜಕೀಯ ಭವಿಷ್ಯ ಇದೇ ಮೊದಲ ಬಾರಿ ಮಂಕಾಗಿಹೋಗುವ ಭೀತಿ ಎದುರಿಸುತ್ತಿದೆ.
ಮೂರು ಬಾರಿ ಶಾಸಕರಾಗಿದ್ದ ಗೋಪಾಲಗೌಡರ ಕೈಯಲ್ಲಿ ಅಧಿಕಾರ ಇಲ್ಲದೆ ಇದ್ದರೂ ಸಮಾಜವಾದಿ ಚಳವಳಿಯ ಮೂಲಕ ಅವರು ಇಡೀ ರಾಜ್ಯದ ಮನೆಮಾತಾಗಿದ್ದರು. ಅವರ ನಂತರದ ದಿನಗಳಲ್ಲಿ ರಾಜಕೀಯ ನಾಯಕರಾಗಿ ಬೆಳೆದ ಎಸ್.ಬಂಗಾರಪ್ಪ, ಜೆ.ಎಚ್.ಪಟೇಲ್, ಕಾಗೋಡು ತಿಮ್ಮಪ್ಪ ಮೊದಲಾದವರು ಅದೇ ಚಳವಳಿಯ ಉತ್ಪನ್ನಗಳು.
ಕಡಿದಾಳು ಮಂಜಪ್ಪನವರು ಕಿರು ಅವಧಿಗೆ ಮುಖ್ಯಮಂತ್ರಿಯಾಗಿದ್ದರೂ ತಮ್ಮ ಪ್ರಾಮಾಣಿಕ ಜೀವನದ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾದವರು. ಅದರ ನಂತರ ಪ್ರಾರಂಭವಾಗಿದ್ದು ಸಾರೆಕೊಪ್ಪ ಬಂಗಾರಪ್ಪ ಎಂಬ ಬಿರುಗಾಳಿ ನಾಯಕನ ಶಕೆ. ಅವರ ರಾಜಕೀಯ ಅವಸಾನದೊಂದಿಗೆ ಮೂಡಿ ಬಂದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ. ಇವರಿಬ್ಬರ ನಡುವೆ ಕಾಣಿಸಿಕೊಂಡ ಜೆ.ಎಚ್. ಪಟೇಲ್ ಜನತಾ ಪರಿವಾರದ ಪ್ರಮುಖ ನಾಯಕರಾಗಿ ಕೊನೆಗೆ ಮುಖ್ಯಮಂತ್ರಿಯೂ ಆದವರು. ಈಗ ಉಳಿದಿರುವವರು ಬಿ.ಎಸ್. ಯಡಿಯೂರಪ್ಪ ಮಾತ್ರ. ಇವರು `ಮಾಡು ಇಲ್ಲವೆ ಮಡಿ' ಎನ್ನುವಷ್ಟು ನಿರ್ಣಾಯಕವಾದ ಚುನಾವಣಾ ರಣರಂಗದ ಮಧ್ಯದಲ್ಲಿದ್ದಾರೆ.
ಬಂಗಾರಪ್ಪನವರದ್ದು ವರ್ಣರಂಜಿತ ವ್ಯಕ್ತಿತ್ವ. ಕಿರುವಯಸ್ಸಿಗೆ ಶಾಸಕರಾಗಿ ನಂತರ ಸಚಿವರೂ ಆಗಿಬಿಟ್ಟ ಬಂಗಾರಪ್ಪ 1983ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧಿಗಳ ಕಣ್ಮಣಿಯಾಗಿದ್ದರು. ಕ್ರಾಂತಿರಂಗದ ನೇತೃತ್ವ ವಹಿಸಿ ರಾಜ್ಯದ ಮೊದಲ ಕಾಂಗ್ರೆಸೇತರ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾದರೂ ಪರಿಸ್ಥಿತಿಯ ಪಿತೂರಿಯಿಂದಾಗಿ ಮುಖ್ಯಮಂತ್ರಿಯಾಗಲು ಮಾತ್ರ ಆಗ ಸಾಧ್ಯವಾಗಿರಲಿಲ್ಲ. ಆ ಚುನಾವಣಾ ಕಾಲದಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿದ ಬಂಗಾರಪ್ಪ ತಮ್ಮ ಸ್ವಂತ ಕ್ಷೇತ್ರ ಸೊರಬಕ್ಕೆ ಭೇಟಿ ನೀಡದೆ ಗೆದ್ದವರು.
ತಮ್ಮ ಪ್ರಚಾರದ ಅಂಗವಾಗಿ ಮನೆಮನೆಗೂ ಕಳುಹಿಸಿಕೊಟ್ಟ ಕಪ್ಪುಕನ್ನಡ ಮತ್ತು ಕಪ್ಪು ಅಂಗಿ ಧರಿಸಿದ್ದ ಅವರ ಭಾವಚಿತ್ರ ಸೊರಬದ ಹಲವಾರು ಮನೆಗಳ ದೇವರ ಪೋಟೊಗಳ ಸ್ಟ್ಯಾಂಡ್‌ನಲ್ಲಿ ಈಗಲೂ ಇವೆ. ನಂತರದ ದಿನಗಳಲ್ಲಿ ಭ್ರಷ್ಟಾಚಾರದ ಆರೋಪ, ಬಂಡಾಯ, ಪಕ್ಷಾಂತರಗಳು ಅವರ ರಾಜಕೀಯ ಜೀವನದ ಭಾಗವೇ ಆಗಿಹೋಯಿತು. ಮುಖ್ಯಮಂತ್ರಿಯಾಗಿ, ಸಚಿವರಾಗಿ ಅವರು ಅಧಿಕಾರ ಅನುಭವಿಸಿದ್ದು ಕಡಿಮೆ ಅವಧಿಗೆ ಆಗಿದ್ದರೂ ಬಂಗಾರಪ್ಪನವರ ಹೆಸರು ಗೊತ್ತಿಲ್ಲದವರು ರಾಜ್ಯದಲ್ಲಿ ಇರಲಾರರು. ಕೊನೆಯವರೆಗೂ ರಾಜಕೀಯವಾಗಿ ತಮ್ಮನ್ನು ಕಡೆಗಣಿಸಲಾಗದ ರೀತಿಯಲ್ಲಿ ಅವರು ಬದುಕಿದವರು. ಅವರ ರಾಜಕೀಯ ಜೀವನದ ಅಂತ್ಯ ಸೋಲುಗಳಲ್ಲಿ ಕೊನೆಗೊಂಡರೂ ಬದುಕಿದ್ದರೆ ಮತ್ತೆ ಈ ಬಾರಿ ಚುನಾವಣೆಯ ಕಣದಲ್ಲಿರುತ್ತಿದ್ದರೇನೋ?
ಛಲದಂಕಮಲ್ಲ: ಸ್ವಂತ ಊರು ಶಿವಮೊಗ್ಗ ಅಲ್ಲದೆ ಇದ್ದರೂ ಮನೆ ಅಳಿಯನಾಗಿ ಬಂದು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿ ರಾಜ್ಯದ ಮುಖ್ಯಮಂತ್ರಿಯಾಗುವ ಮಟ್ಟಕ್ಕೆ ಬೆಳೆದ ಬಿ.ಎಸ್.ಯಡಿಯೂರಪ್ಪ ಅವರು ಬಂಗಾರಪ್ಪನವರ ರೀತಿಯಲ್ಲಿಯೇ ಛಲದಂಕಮಲ್ಲ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಬಿಜೆಪಿ  ಅಧಿಕಾರಕ್ಕೆ ತಂದವರೆಂಬ ಹೆಗ್ಗಳಿಕೆಗೂ ಪಾತ್ರರಾದವರು. ರಾಜಕೀಯ ಹೋರಾಟ, ಗೆಲುವಿನ ಸಾಧನೆ, ಭ್ರಷ್ಟಾಚಾರದ ಆರೋಪ, ಬಂಡಾಯದ ಬೆದರಿಕೆ, ಪಕ್ಷಾಂತರ ಹೀಗೆ ಇವರು ಸದಾ ಸುದ್ದಿಯ ಬೆಳಕಲ್ಲಿದ್ದವರು.
ಯಡಿಯೂರಪ್ಪನವರು ಭವಿಷ್ಯದ ರಾಜಕೀಯದಲ್ಲಿ ಪ್ರಸ್ತುತವಾಗಿ ಉಳಿಯಬೇಕಾದರೆ ಶಿವಮೊಗ್ಗ ಜಿಲ್ಲೆಯನ್ನು ಅವರು ಗೆಲ್ಲಬೇಕು. ಈಗಿನ ಪರಿಸ್ಥಿತಿಯಲ್ಲಿ ಜಿಲ್ಲೆಯ ಶಿಕಾರಿಪುರ ಹೊರತುಪಡಿಸಿ ಬೇರೆ ಕ್ಷೇತ್ರಗಳಲ್ಲಿ ಗೆಲ್ಲಬಲ್ಲ ಕರ್ನಾಟಕ ಜನತಾ ಪಕ್ಷದ (ಕೆಜೆಪಿ)  ಅಭ್ಯರ್ಥಿಗಳು ಯಾರೂ ಕಾಣುತ್ತಿಲ್ಲ. ಶಿಕಾರಿಪುರದಲ್ಲಿಯೂ ಅವರು ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪಗೌಡ ಅವರಿಂದ ಪ್ರಬಲ ಸ್ಪರ್ಧೆ ಎದುರಿಸುತ್ತಿದ್ದಾರೆ.
ಮೂರು ದಶಕಗಳಲ್ಲಿ ಶಿವಮೊಗ್ಗ ಮೂಲದ ಈ ಇಬ್ಬರು ನಾಯಕರು ರಾಜ್ಯ ರಾಜಕಾರಣವನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ನಿಯಂತ್ರಿಸುತ್ತಾ ಬಂದಿದ್ದಾರೆ. ಎಂಬತ್ತರ ದಶಕದಲ್ಲಿ ಶಿವಮೊಗ್ಗ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಬಂಗಾರಪ್ಪನವರ ಬೆಂಬಲಿಗರು ಆರಿಸಿ ಬರುತ್ತಿದ್ದರೆ, ಎರಡು ಸಾವಿರದ ದಶಕದಲ್ಲಿ ಯಡಿಯೂರಪ್ಪನವರ ಬೆಂಬಲಿಗರು ಜಿಲ್ಲೆಯ ಬಹುತೇಕ ಸ್ಥಾನಗಳನ್ನು ಗೆದ್ದಿದ್ದರು. ಈ ಇಬ್ಬರು ನಾಯಕರಿಗೂ ರಾಜ್ಯಮಟ್ಟದ ನಾಯಕರಾಗಿ ಬೆಳೆಯುವಂತಹ ಶಕ್ತಿ ನೀಡಿದ್ದು ತವರು ಜಿಲ್ಲೆಯಲ್ಲಿ ಮಾಡಿದ್ದ ಸಾಧನೆ.
ಇತ್ತೀಚಿನ ಈ ಇಬ್ಬರು ಹಿರಿಯ ನಾಯಕರ  ರೀತಿಯಲ್ಲಿಯೇ ರಾಜ್ಯಕ್ಕೆ ನಾಯಕತ್ವ ನೀಡಬಲ್ಲ ಇನ್ನೊಬ್ಬ ನಾಯಕ ಸದ್ಯ ಜಿಲ್ಲೆಯಲ್ಲಿರುವ ಯಾವ ರಾಜಕೀಯ ಪಕ್ಷದಲ್ಲಿಯೂ ಕಾಣುತ್ತಿಲ್ಲ. ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿರುವ ಹಿರಿತಲೆ -ಕಾಗೋಡು ತಿಮ್ಮಪ್ಪ ಮಾತ್ರ. ಗೆಲುವಿನ ಮೂಲಕ ಗೌರವಯುತವಾಗಿ ರಾಜಕೀಯದಿಂದ ನಿವೃತ್ತಿಯಾಗಬೇಕೆಂಬ ಆಸೆ ಇಟ್ಟುಕೊಂಡಂತಿರುವ ಇವರಲ್ಲಿ ಹೆಚ್ಚಿನ ಮಹತ್ವಾಕಾಂಕ್ಷೆ ಇಲ್ಲ.
82 ವರ್ಷ ವಯಸ್ಸಿನ ಈ ಹಿರಿಯನಲ್ಲಿ ಅಂತಹ ಚೈತನ್ಯವೂ ಉಳಿದ ಹಾಗಿಲ್ಲ. ಸಾಗರದ ಮಾಲ್ವೆ ಎಂಬ ಊರಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಗೋಡು ಅಲ್ಲಿ ಸೇರಿದ್ದ ಬೆಂಬಲಿಗರನ್ನು ಎದುರಿಗೆ ಕರೆದು `ಇವರೆಲ್ಲ ಹಳೆಯ ತಲೆಮಾರಿನವರು, ಅದರ ನಂತರದವರು ಇವರು, ಇವರ ನಂತರ ಈ ಮಕ್ಕಳು' ಎಂದು ವರ್ಗವಿಂಗಡಣೆ ಮಾಡಿ ನಮಗೆ ಪರಿಚಯಿಸಿದರು.
ಮೊದಲ ತಲೆಮಾರಿನ ಹಿರಿಯರ ಮಾತು ಮತ್ತು ಬಾಗಿದ ತಲೆಗಳು ಈಗಲೂ ನಾಯಕನ ಬಗ್ಗೆ ಪ್ರೀತಿ-ಗೌರವವನ್ನು ಸೂಚಿಸುವಂತಿತ್ತು. ಹಳೆಯ ನೆನೆಪುಗಳೇ ಇಲ್ಲದ ಯುವಕರಲ್ಲಿ ಒಂದು ಬಗೆಯ ನಿರಾಸಕ್ತಿ, ಉಳಿದಂತೆ ಮಕ್ಕಳು ಸೇರಿರುವುದು ಹಂಚುವ ಚಾಕಲೇಟ್‌ಗಳಿಗಾಗಿ ಮಾತ್ರ.
ಚಳವಳಿ ಪ್ರೇರಿತ ರಾಜಕೀಯದ ಮೂಲಕ ಬಂದ ಕಾಗೋಡು ತಿಮ್ಮಪ್ಪನವರಂತಹವರು  ತಮ್ಮ ಸಂಬಂಧಿ ಬೇಳೂರು ಗೋಪಾಲಕೃಷ್ಣ ಎಂಬ ಗಣಿಸಂಸ್ಕೃತಿಯ ಪ್ರಭಾವಕ್ಕೊಳಗಾಗಿರುವ ಅಭ್ಯರ್ಥಿ ಎದುರು ಕಳೆದೆರಡು ಚುನಾವಣೆಗಳನ್ನು ಸೋತಿರುವುದು ಶಿವಮೊಗ್ಗ ಜಿಲ್ಲೆಯ ರಾಜಕೀಯ ಸಾಗುತ್ತಿರುವ ಹಾದಿ  ತೋರಿಸುವಂತಿದೆ. ಇದು ತಿಮ್ಮಪ್ಪನವರು ಪರಿಚಯಿಸಿದ  ಮೂರು ತಲೆಮಾರುಗಳ ಪ್ರತಿಕ್ರಿಯೆಗಳಿಂದಲೂ ಸ್ಪಷ್ಟವಾಗುತ್ತದೆ.
ಬಿಜೆಪಿಯಲ್ಲಿರುವ ಕೆ.ಎಸ್.ಈಶ್ವರಪ್ಪ ತನ್ನ ಗೆಲುವಿಗಾಗಿಯೇ ಏದುಸಿರುಬಿಡುತ್ತಿದ್ದಾರೆ. ಇನ್ನು ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷದ ನಾಯಕರಾಗುವುದು ಅಷ್ಟರಲ್ಲಿಯೇ ಇದೆ. ಬಂಗಾರಪ್ಪನವರ ಇಬ್ಬರು ಮಕ್ಕಳಾದ ಕುಮಾರ್ ಮತ್ತು ಮಧು ಚುನಾವಣಾ ಕಣದಲ್ಲಿದ್ದರೂ ಮನೆಯೊಳಗಿನ ಜಗಳದಿಂದಾಗಿ ಪರಸ್ಪರ ಕಾದಾಡುತ್ತ ತಮ್ಮ ರಾಜಕೀಯ ಜೀವನವನ್ನು ತಾವೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ಬಂಗಾರಪ್ಪನವರ ಶಿಷ್ಯರಾಗಿದ್ದ ಎಚ್. ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಅವರಿಗೆ ತಮ್ಮ ಕ್ಷೇತ್ರಗಳಲ್ಲಿ ಗೆದ್ದರೆ ಸಾಕೆನಿಸಿದೆ.
ಇದೇ ರೀತಿ ಯಡಿಯೂರಪ್ಪನವರ ಮಗ ರಾಘವೇಂದ್ರ ರಾಜಕೀಯ ಪ್ರವೇಶದ ಪ್ರಾರಂಭದ ಹಂತದಲ್ಲಿಯೇ ಭ್ರಷ್ಟಾಚಾರ, ಪಕ್ಷಾಂತರದ ಆರೋಪಗಳನ್ನು ಹೊತ್ತುಕೊಂಡಿದ್ದಾರೆ. ಇವರಲ್ಲಿ ಯಾರೂ ರಾಜ್ಯಮಟ್ಟದ ನಾಯಕರಾಗಿ ಬೆಳೆಯಬಲ್ಲರೆಂಬ ನಿರೀಕ್ಷೆಯನ್ನು ಹುಟ್ಟಿಸುವುದಿಲ್ಲ. ಅಂತಹ ಮಹತ್ವಾಕಾಂಕ್ಷೆಯೂ ಅವರಲ್ಲಿದ್ದ ಹಾಗೆ ಕಾಣುವುದಿಲ್ಲ.
ರಾಜ್ಯ ರಾಜಕೀಯದಲ್ಲಿ ಶಿವಮೊಗ್ಗ ಜಿಲ್ಲೆಯ ಪತಾಕೆ ಎತ್ತಿಹಿಡಿಯುವ ಸಾಮರ್ಥ್ಯ ಈಗಲೂ ಇರುವುದು ಯಡಿಯೂರಪ್ಪನವರಿಗೆ ಮಾತ್ರ. ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ 1994ರ ಚುನಾವಣೆಯಲ್ಲಿ ಸ್ವಂತ ಪಕ್ಷ ಕಟ್ಟಿ ಎದುರಿಸಿದ ಬಂಗಾರಪ್ಪನವರು ಅಧಿಕಾರ ಗಳಿಸುವಷ್ಟು ಸ್ಥಾನಗಳನ್ನು ಗಳಿಸದೆ ಇದ್ದರೂ ಕಾಂಗ್ರೆಸ್ ಪಕ್ಷದ ಪರಾಭವಕ್ಕೆ ಕಾರಣವಾಗಿದ್ದರು. ಯಡಿಯೂರಪ್ಪನವರೂ ಅದೇ ಹಾದಿಯಲ್ಲಿದ್ದಾರೆ.
ಬಂಗಾರಪ್ಪನವರಂತೆ ಗೆದ್ದು ಅಧಿಕಾರಕ್ಕೆ ಬರುವಂತಹ ಶಕ್ತಿ ಯಡಿಯೂರಪ್ಪನವರಿಗೂ ಈಗ ಇಲ್ಲದೆ ಇದ್ದರೂ ಬಿಜೆಪಿಯ ಸೋಲಿಗೆ ಕಾರಣವಾಗಬಲ್ಲರು. ಬಿಜೆಪಿ ವಿರುದ್ಧ ದ್ವೇಷ ಸಾಧನೆಗೆ ಒಳಗಿಂದೊಳಗೆ ತಹತಹಿಸುತ್ತಿರುವ ಯಡಿಯೂರಪ್ಪ ಇದಕ್ಕಾಗಿ ಕಾಂಗ್ರೆಸ್ ಜತೆಯಲ್ಲಿ ಹೊಂದಾಣಿಕೆ ಮಾಡಿಕೊಂಡರೂ ಆಶ್ಚರ್ಯ ಇಲ್ಲ. ಆದರೆ ಕಾಂಗ್ರೆಸ್ ಪಕ್ಷದಿಂದ ಸಿಡಿದುಹೋದ ನಂತರ ಬಂಗಾರಪ್ಪನವರು ಮತ್ತೆ ತಮ್ಮ ರಾಜಕೀಯ ಜೀವನದ ವೈಭವವನ್ನು ಮರಳಿ ಪಡೆಯಲಾಗಿಲ್ಲ. ತಂತಿಮೇಲೆ ನಡೆಯುತ್ತಿರುವ ಯಡಿಯೂರಪ್ಪನವರು ಅದೇ ಅಪಾಯವನ್ನು ಎದುರಿಸುತ್ತಿದ್ದಾರೆ. ಜಾರಿಬಿದ್ದರೆ ಶಿವಮೊಗ್ಗ ಜಿಲ್ಲೆಯನ್ನು ಕಟ್ಟಿಕೊಂಡೇ ಕೆಳಗೆ ಬೀಳಬಹುದು.

Thursday, April 25, 2013

ಗೋಪಾಲಗೌಡರ ಬದುಕೇ ಚುನಾವಣಾ ನೀತಿ ಸಂಹಿತೆ.

ತೀರ್ಥಹಳ್ಳಿ: -ಶಾಂತವೇರಿ ಗೋಪಾಲಗೌಡರು1952ರ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಖರ್ಚು ಮಾಡಿದ್ದು ಐದು ಸಾವಿರ ರೂಪಾಯಿ. ಇದರಲ್ಲಿ ಎರಡು ಸಾವಿರ ರೂಪಾಯಿ ಸಾಗರದ ಸಹಕಾರಿ ಸೊಸೈಟಿಯಿಂದ ಸಾಲ ಪಡೆದದ್ದು. ಈ ಸಾಲವನ್ನು
ಗೋಪಾಲಗೌಡರು ತೀರಿಸಿದ್ದು ಗೆದ್ದಮೇಲೆ ಶಾಸಕರಾಗಿ ತಮಗೆ ಬರುತ್ತಿದ್ದ ದಿನಭತ್ಯೆ ಮತ್ತು ಕ್ಷೇತ್ರಭತ್ಯೆಯಲ್ಲಿ ಉಳಿತಾಯ ಮಾಡಿದ ಹಣದಿಂದ. ಮರುಚುನಾವಣೆಯಲ್ಲಿ ಗೋಪಾಲಗೌಡರು ಸೋತಾಗ ಅವರು ಯಥಾಪ್ರಕಾರ `ಬರಿಗೈ ಫಕೀರ'. ನಾಲ್ಕುಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಜನರೆ ವೋಟಿನ ಜತೆ ನೋಟು ಕೊಟ್ಟು ಅವರನ್ನು ಗೆಲ್ಲಿಸಿದ್ದರು.
-ಅದೇ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಬದರಿನಾರಾಯಣ್ ಅಯ್ಯಂಗಾರ್ ವಿರುದ್ದದ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವಂತೆ ಗೋಪಾಲಗೌಡರ ಮೇಲೆ ಒತ್ತಡ ಹೇರಲಾಗುತ್ತದೆ. ಅಯ್ಯಂಗಾರ್ ಸ್ನೇಹಿತನೊಬ್ಬ ಬಂದು `ಎಲೆಕ್ಷನ್‌ಗೆ ಏನಿಲ್ಲ ಎಂದರೂ 30 ಖರ್ಚಾಗುತ್ತದೆ. ಅವರು ಗೆದ್ದರೆ ಮಂತ್ರಿಯಾಗುವ ಛಾನ್ಸ್ ಜಾಸ್ತಿ. ನೀವು ದೊಡ್ಡ ಮನಸು ಮಾಡಿ ಉಮೇದುವಾರಿಕೆ ಹಿಂದೆಗೆದುಕೊಂಡರೆ ನಾವು ಬದರಿಯವರ ಬಳಿ ಮಾತನಾಡಿ ಅವರನ್ನು ಕರಾರಿಗೆ ಒಪ್ಪಿಸ್ತೇವೆ..'ಎಂದನಂತೆ.
ಇದನ್ನು ಕೇಳಿದ ಗೌಡರು `ಸ್ವಾಮಿ ನನ್ನ ಬೂಟು ಬಾಗಿಲ ಬಳಿ ಇದೆ, ನಾನು ಎದ್ದು ಕೈಗೆ ತೆಗೆದುಕೊಳ್ಳೊದ್ರೊಳಗೆ ನೀವು ಹೊರಗೆ ಹೋಗೋದು ವಾಸಿ' ಎನ್ನುವಷ್ಟರಲ್ಲಿ ಬಂದವರು ಓಡಿಹೋದರಂತೆ.
- ಗೋಪಾಲಗೌಡರ ಕಷ್ಟಗಳನ್ನು ನೋಡಲಾಗದ ಸ್ನೇಹಿತನೊಬ್ಬ ಆಗಿನ ಕಂದಾಯ ಮಂತ್ರಿ ಕಡಿದಾಳ ಮಂಜಪ್ಪನವರ ಬಳಿ ಹೋಗಿ ಗೌಡರಿಗೆ ಒಂದೈದು ಎಕರೆ ಜಮೀನು ಮಂಜೂರು ಮಾಡುವಂತೆ ಕೇಳಿಕೊಂಡನಂತೆ. ಅರ್ಜಿಹಾಕಲು ಹೇಳು ಎಂದರು ಕಡಿದಾಳ್. ಇದನ್ನು ಕೇಳಿದ ಗೌಡರು ` ನನಗೇಕೆ ಜಮೀನು? ಉಳುವವನೆ ಒಡೆಯನಾಗಬೇಕೆಂಬುದು ನನ್ನ ಹೋರಾಟ. ಹೀಗಿರುವಾಗ ಉಳುಮೆ ಮಾಡದೆ ಭೂಮಿಯ ಒಡೆಯನಾಗುವ ನೈತಿಕ ಹಕ್ಕು ನನಗಿಲ್ಲ' ಎಂದು ನೆರವನ್ನು ತಿರಸ್ಕರಿಸಿದರಂತೆ.
-ಚುನಾವಣಾ ಭಾಷಣಗಳಲ್ಲಿ ಅವರೆಂದು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಇಲ್ಲವೆ ಜಾತಿಗಳನ್ನು ಎತ್ತಿಕಟ್ಟುವ ಮಾತುಗಳನ್ನು ಆಡುತ್ತಿರಲಿಲ್ಲ. ಮೂರು ಚುನಾವಣೆಗಳಲ್ಲಿ ಗೆದ್ದರೂ ಅವರು ಯಾವ ಸನ್ಮಾನ ಸಭೆಗಳಲ್ಲಿ ಭಾಗವಹಿಸಿರಲಿಲ್ಲ. ಅವರ ಸಭೆಗಳೆಂದರೆ ಪಕ್ಷದ ಕಾರ್ಯಕರ್ತರು ಮತ್ತು ಮತದಾರರನ್ನು ಭೇಟಿ ಮಾಡುವ ಕಾರ್ಯಕ್ರಮಗಳಾಗಿರುತ್ತಿದ್ದವು.
ಗೋಪಾಲಗೌಡರು ಎದುರಿಸಿದ್ದ ನಾಲ್ಕು ಚುನಾವಣೆಗಳ ಅನುಭವಗಳನ್ನು ಸಂಪೂರ್ಣವಾಗಿ ಪುಸ್ತಕರೂಪದಲ್ಲಿ ದಾಖಲಿಸಿ ಹಂಚಿದರೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಿಗೆ ಮಾತ್ರ ಅಲ್ಲ ರಾಜಕಾರಣಿಯ ನಿತ್ಯ ಜೀವನಕ್ಕೆ ಕೂಡಾ ಮಾದರಿ ನೀತಿ ಸಂಹಿತೆಯಾಗಬಲ್ಲದು. ತೀರ್ಥಹಳ್ಳಿ-ಸಾಗರಗಳಲ್ಲಿರುವ ಹಳೆತಲೆಗಳ ಬಳಿ `ಆ ದಿನಗಳ' ಬಗ್ಗೆ ಇಂತಹ ನೂರಾರು ನೆನಪುಗಳಿವೆ.
ನೋಡನೋಡುತ್ತಿದ್ದಂತೆಯೇ ಬದಲಾವಣೆಗೊಳಗಾಗುತ್ತಾ ಹೋದ ಕಾಲದ ಜತೆ ಹೆಜ್ಜೆ ಹಾಕಲಾಗದೆ ಅವರೆಲ್ಲರೂ ಮನೆ ಸೇರಿಬಿಟ್ಟಿದ್ದಾರೆ. ಗೋಪಾಲಗೌಡರ ನೆನೆಪಿಗೆ ಒಂದು ಸರಿಯಾದ ಸ್ಮಾರಕವನ್ನು ನಿರ್ಮಿಸಲು ಇಲ್ಲಿನ ಜನಪ್ರತಿನಿಧಿಗಳಿಗೆ ಸಾಧ್ಯವಾಗಿಲ್ಲ. ಅರಗದಲ್ಲಿ ಅವರು ಹುಟ್ಟಿದ ಮನೆಯ ಕುರುಹು ಕೂಡಾ ಇಲ್ಲ. ಅವರ ನೆನೆಪಿಗಾಗಿ ನಿರ್ಮಾಣ ಮಾಡಲು ಹೊರಟ ಗ್ರಂಥಾಲಯ ಅಪೂರ್ಣ ಸ್ಥಿತಿಯಲ್ಲಿದೆ. ದೇಶಕ್ಕೆ ಮಾದರಿಯಂತಿದ್ದ ಇಲ್ಲಿನ ರಾಜಕೀಯ ಸಂಸ್ಕೃತಿ ಈಗ ಹರಿಯುತ್ತಿರುವ ಹಣದ ಹೊಳೆಯಲ್ಲಿ ಕೊಚ್ಚಿಹೋಗುತ್ತಿದೆ.
ಇದು ರಾತ್ರಿ ಹಗಲಾಗುವುದರೊಳಗೆ ಆಗಿರುವ ಬದಲಾವಣೆಯೂ ಅಲ್ಲ. ಗೋಪಾಲಗೌಡರೇ ಎರಡನೇ ಬಾರಿ ಸ್ಪರ್ಧಿಸಿದಾಗ ಸೋತುಹೋಗಿದ್ದರು. ಇದಕ್ಕೆ ಎದುರಾಳಿ ಅಭ್ಯರ್ಥಿ ಮತದಾರರಿಂದ ಧರ್ಮಸ್ಥಳದ ಆಣೆ ಮಾಡಿಸಿದ್ದು ಮತ್ತು ಬಾಡೂಟ ಹಾಕಿಸಿದ್ದು ಕಾರಣ ಎನ್ನುವುದು ಚರ್ಚೆಗೊಳಗಾಗಿತ್ತು.
ಹೀಗಿದ್ದರೂ ಅದರ ನಂತರದ ಎರಡು ಚುನಾವಣೆಗಳನ್ನು ಗೋಪಾಲಗೌಡರು ಗೆದ್ದುಬಿಟ್ಟಿದ್ದರು. ಮೂರು ಅವಧಿಗೆ ಶಾಸಕರಾಗಿದ್ದ ಗೋಪಾಲಗೌಡರು ಖಾಲಿ ಜೇಬನ್ನಿಟ್ಟುಕೊಂಡೇ ಚುನಾವಣೆಗಳಲ್ಲಿ ಶ್ರಿಮಂತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿ ಜನಬೆಂಬಲದ ಮೂಲಕ ಗೆದ್ದುಬಂದವರು. ಅವರ ಕಾಲದ ಚುನಾವಣೆ, ಅದಕ್ಕೆ ಖರ್ಚಾಗುತ್ತಿದ್ದ ಹಣ, ಭಾಷಣ, ಪ್ರಚಾರ ಶೈಲಿಗಳೆಲ್ಲ  ಮಲೆನಾಡಿನಲ್ಲಿ ದಂತಕತೆಗಳಾಗಿ ಹೋಗಿವೆ. ಮೂರೂ ಚುನಾವಣೆಯ ಕಾಲದಲ್ಲಿ ಅವರ ಬಳಿ ಠೇವಣಿ ಸಲ್ಲಿಸಲು ದುಡ್ಡು ಇರಲಿಲ್ಲ. ಕ್ಷೇತ್ರದ ಜನತೆಯೇ ದೇಣಿಗೆ ಸಂಗ್ರಹಿಸಿ ಚುನಾವಣಾ ವೆಚ್ಚವನ್ನು ಸರಿದೂಗಿಸುತ್ತಿದ್ದರು.
ಬದಲಾಗಿರುವ ಕಾಲದಲ್ಲಿ ರಾಜ್ಯದ ಸಮಾಜವಾದಿ ಚಳುವಳಿಯ ಕರ್ಮಭೂಮಿಯಾಗಿದ್ದ ತೀರ್ಥಹಳ್ಳಿ-ಸಾಗರಗಳಲ್ಲಿಯೂ ಖಂಡಿತ ಸುಧಾರಣೆಗಳಾಗಿವೆ. ಭೂ ಸುಧಾರಣೆ ಜಾರಿಗೆ ಬಂದು ಉಳುವವನೇ ಭೂಮಿಯ ಒಡೆಯನಾಗಿದ್ದಾನೆ. ದೀವ ಒಕ್ಕಲಿನವರು ಈಗ ಕಾಲು ಮುಟ್ಟುವ ಪಂಚೆ ಉಡಬಹುದು, ಧಣಿಗಳೇ ಇಲ್ಲದ ಈಗಿನ ಊರಿನಲ್ಲಿ ಸಾಮಾನ್ಯ ಮನುಷ್ಯ ಚಪ್ಪಲಿಹಾಕಿಕೊಂಡೇ ಅಡ್ಡಾಡಬಹುದು.
ಮೇಲ್ಜಾತಿಯ ಕಿರಿಯರನ್ನು ಏಕವಚನದಿಂದ ಕರೆಯಬಹುದು. ಶೂದ್ರರು ಬ್ರಾಹ್ಮಣ-ಲಿಂಗಾಯತ ಕುಟುಂಬಗಳ ಮನೆಯಲ್ಲಿನ ಚಾವಡಿಗಳ ಎರಡನೆ ಮಜಲು ದಾಟಿಹೋಗಬಹುದು. ಅರ್ವತ್ತು ವರ್ಷಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಊಳಿಗಮಾನ್ಯ ವ್ಯವಸ್ಥೆಯ ವಿಕಾರರೂಪ ಇಲ್ಲಿತ್ತು. ಇದರ ವಿರುದ್ಧವೇ ನಡೆದದ್ದು ಕಾಗೋಡು ಸತ್ಯಾಗ್ರಹ. ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಅವರೇ ಬಂದು ಸತ್ಯಾಗ್ರಹದಲ್ಲಿ ಭಾಗವಹಿಸಿ ದೇಶದ ಗಮನ ಸೆಳೆದಿದ್ದರು. ಈ ಸತ್ಯಾಗ್ರಹದ ಮೂಲಕವೇ ಜಿಲ್ಲೆಯಲ್ಲಿ ಹಲವಾರು ರಾಜಕೀಯ ನಾಯಕರು ಹುಟ್ಟಿಕೊಂಡರು.
ಇವೆಲ್ಲ ಇಂದು ಇತಿಹಾಸದ ಪುಟಗಳ ಓದಿಗಷ್ಟೇ ಸೀಮಿತ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಆಯ್ಕೆಯಾದ ಬೇಳೂರು ಗೋಪಾಲಕೃಷ್ಣ ಅವರು ಮೊದಲ ಬಾರಿ ರಾಜಕೀಯದ ಹೊಸ ಮಾದರಿಯನ್ನು ಜಿಲ್ಲೆಗೆ ಪರಿಚಯಿಸಿದರು. ಈಗ ಈ ಸೋಂಕು ತೀರ್ಥಹಳ್ಳಿಗೂ ತಗಲಿದೆ.  ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಮಂಜುನಾಥ ಗೌಡ ಮತ್ತು ಜೆಡಿ(ಎಸ್) ಅಭ್ಯರ್ಥಿ ಮದನ್ ಅವರ `ಕೊಡುಗೈ ದಾನ' ಇಲ್ಲಿ ಮನೆಮಾತಾಗಿ ಹೋಗಿದೆ.
 ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮತದಾರರಿಗೆ ಮುಂಗಡವಾಗಿ `ನೆರವು' ತಲುಪಿಸಿದ ಅಭ್ಯರ್ಥಿಗಳು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚಹರೆಯನ್ನೇ ಬದಲಾಯಿಸಿಬಿಟ್ಟಿದ್ದಾರೆ. ಎರಡು ತಿಂಗಳುಗಳ ಹಿಂದೆಯೇ ಇಲ್ಲಿನ ಸ್ವಸಹಾಯ ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಹಣ ನೀಡಲಾಗಿದೆ. ಸಾಲ ಕೇಳದವರಿಗೂ ಸಹಕಾರ ಸಂಘಗಳಿಂದ ಪುಕ್ಕಟೆ ಎಂಬಂತೆ ಸಾಲ ನೀಡಲಾಗಿದೆ.
 ಮತದಾರರಿಗೆ ಮೊದಲ ಸುತ್ತಿನ ಸೀರೆ, ಬೆಳ್ಳಿಬಟ್ಟಲುಗಳ ವಿತರಣೆ ಮುಗಿದುಹೋಗಿದೆ. ಫಲಾನುಭವಿಗಳಿಂದ ಧರ್ಮಸ್ಥಳದ ಮೇಲೆ ಆಣೆ ಹಾಕಿಸಿ ಮತಹಾಕುವ ಭರವಸೆ ಪಡೆಯಲಾಗುತ್ತಿದೆ. ಇದನ್ನು ಗಮನಿಸಿದ ಡಿ.ವೀರೇಂದ್ರ ಹೆಗ್ಗಡೆಯವರು ಕ್ಷೇತ್ರಕ್ಕೂ ಚುನಾವಣೆಗೂ ಸಂಬಂಧ ಇಲ್ಲ ಎಂದು ಕರಪತ್ರ ಹೊರಡಿಸಿದ್ದಾರೆ.
ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು ಸಜ್ಜನ, ಪ್ರಾಮಾಣಿಕ ಎಂಬ ಜನಾಭಿಪ್ರಾಯ ಇದೆ, ಒಳ್ಳೆಯ ಸಂಸದೀಯ ಪಟು ಕೂಡಾ. ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರೂ ಸೋತ ನಂತರವೂ ಜನರ ಜತೆ ಒಡನಾಟ ಇಟ್ಟುಕೊಂಡ ನಾಯಕ. ಇಬ್ಬರೂ ಉಳಿದ ಅಭ್ಯರ್ಥಿಗಳ ಹಣದ ಭರಾಟೆ ನೋಡಿ ದಂಗಾಗಿ ಹೋಗಿದ್ದಾರೆ.
ಬೇರೆಲ್ಲ ಕಡೆ ನಡೆಯದಂತಹ ಚುನಾವಣಾ ಅಕ್ರಮಗಳು ತೀರ್ಥಹಳ್ಳಿ, ಸಾಗರ ಕ್ಷೇತ್ರಗಳಲ್ಲಿ ನಡೆಯುತ್ತಿಲ್ಲ. ಶಾಂತವೇರಿ ಗೋಪಾಲಗೌಡರ ರಾಜಕೀಯವನ್ನು ಕಂಡ ಇಲ್ಲಿನ ಮಣ್ಣಿಗೆ ಈಗಿನ ರಾಜಕೀಯ ಸಂಸ್ಕೃತಿ ಹೊಸತು ಅಷ್ಟೆ..ಇದು ಮುಂದುವರಿಯಲಿದೆಯೇ ಇಲ್ಲವೆ ಕೊನೆಗೊಳ್ಳಲಿದೆಯೇ ಎನ್ನುವುದನ್ನು ಈಗಿನ ಚುನಾವಣೆ ನಿರ್ಧರಿಸಲಿದೆ.

Wednesday, April 24, 2013

ಎಸ್‌ಡಿಪಿಐ ಎಂದರೆ ಬಿಜೆಪಿಗೆ ಪ್ರೀತಿ, ಕಾಂಗ್ರೆಸ್‌ಗೆ ಭಯ.

ಮಂಗಳೂರು: `ಹಿಂದೂ ಕೋಮುವಾದದ ಬಗ್ಗೆ ಇಷ್ಟೆಲ್ಲ ಕೂಗಾಡುವ ನಿಮ್ಮ ಕಣ್ಣಿಗೆ ಮುಸ್ಲಿಂ ಕೋಮುವಾದ ಕಾಣುವುದೇ ಇಲ್ವಾ' ಎಂದು ಹಿಂದೂ ಸಂಘಟನೆಯ ನಾಯಕರು ಜಾತ್ಯತೀತರೆಂದು ಹೇಳಿಕೊಳ್ಳುವವರ
ನ್ನು ಆಗಾಗ ಕೆಣಕುವುದುಂಟು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಪ್ರಶ್ನೆ ಉಳಿದೆಲ್ಲ ಕಡೆಗಿಂತಲೂ ಹೆಚ್ಚು ಕೇಳಿಸುತ್ತದೆ. ಇದು ತಳ್ಳಿಹಾಕುವಂತಹ ಪ್ರಶ್ನೆಯೂ ಅಲ್ಲ.
ಹಿಂದೂಗಳಂತೆ ಮುಸ್ಲಿಮರಲ್ಲಿ ಕೋಮುವಾದಿಗಳಿದ್ದರೂ ಇತ್ತೀಚಿನವರೆಗೆ ಅವರಿಗೆ ಸಂಘಟನೆಯ ಬೆಂಬಲ ಇರಲಿಲ್ಲ. ಬದಲಾಗಿರುವ ಪರಿಸ್ಥಿತಿಯಲ್ಲಿ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' ಎಂಬ ಸಂಘಟನೆ ಆ ಕೊರತೆಯನ್ನು ತುಂಬುವಂತೆ ಬೆಳೆಯುತ್ತಿದೆ. ಸಂಘ ಪರಿವಾರದ ನಾಯಕರು `ಮುಸ್ಲಿಂ ಗುಮ್ಮ'ನನ್ನು ತೋರಿಸಿ ಸಂಘಟನೆಯನ್ನು ಬೆಳೆಸುತ್ತಿದ್ದರೆ, ಪಾಪ್ಯುಲರ್ ಫ್ರಂಟ್ `ಹಿಂದೂ ಗುಮ್ಮ'ನನ್ನು ತಮ್ಮ ಸಂಘಟನೆ ಬಲಪಡಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ.
ಇದರಿಂದಾಗಿ ಹಿಂದೂ ಕೋಮುವಾದ ಬೆಳೆಯುತ್ತಾ ಹೋದಂತೆ ಸಮಾನಾಂತರವಾಗಿ ಮುಸ್ಲಿಂ ಕೋಮುವಾದವೂ ಜಿಲ್ಲೆಯಲ್ಲಿ ಬೆಳೆಯುತ್ತಿದೆ. ವಿಚಿತ್ರವೆಂದರೆ ಈ ಬೆಳವಣಿಗೆಯಿಂದ ಮುಸ್ಲಿಂ ವಿರೋಧಿ ಎಂಬ ಆರೋಪಕ್ಕೊಳಗಾಗಿರುವ ಬಿಜೆಪಿ ನಿಶ್ಚಿಂತೆಯಿಂದಿದ್ದರೆ, ಮುಸ್ಲಿಂ ಪರ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ತಳಮಳಕ್ಕೀಡಾಗಿದೆ. ಈ ವಿಲಕ್ಷಣ ವಿದ್ಯಮಾನವೇ ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣೆಯನ್ನು ಕುತೂಹಲಕಾರಿಯಾಗಿ ಮಾಡಿದೆ.
`ಪಾಪ್ಯುಲರ್ ಫ್ರಂಟ್'ನ ಸಂಘಟನೆಯ ರೂಪ, ಉದ್ದೇಶ ಮತ್ತು ಚಟುವಟಿಕೆಗಳನ್ನು ಗಮನಿಸಿದವರು ಇದು `ಮುಸ್ಲಿಮರ ಆರ್‌ಎಸ್‌ಎಸ್' ಎಂದು ಆರೋಪಿಸುವುದುಂಟು. ಆರ್‌ಎಸ್‌ಎಸ್ ರೀತಿಯಲ್ಲಿಯೇ ಇದಕ್ಕೆ ಹಲವಾರು ಅಂಗ ಸಂಸ್ಥೆಗಳಿವೆ.
ವಿಶ್ವಹಿಂದೂ ಪರಿಷತ್ ಮಾದರಿಯಲ್ಲಿ ಧಾರ್ಮಿಕ ಗುರುಗಳಿಗಾಗಿ `ಆಲ್ ಇಂಡಿಯಾ ಇಮಾಮಿ ಕೌನ್ಸಿಲ್', ಎಬಿವಿಪಿ ಮಾದರಿಯಲ್ಲಿ ವಿದ್ಯಾರ್ಥಿಗಳಿಗಾಗಿ `ಸ್ಟೂಡೆಂಟ್ ಕ್ಯಾಂಪಸ್ ಫ್ರಂಟ್', ದುರ್ಗಾವಾಹಿನಿಯನ್ನು ಹೋಲುವಂತೆ ಮಹಿಳೆಯರಿಗಾಗಿ `ನ್ಯಾಷನಲ್ ವುಮೆನ್ ಫ್ರಂಟ್' ಮತ್ತು ಬಿಜೆಪಿ ಮಾದರಿಯಲ್ಲಿ ರಾಜಕೀಯ ಮುಖವಾಗಿ `ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ' (ಎಸ್‌ಡಿಪಿಐ) ಇವೆ. ಆರ್‌ಎಸ್‌ಎಸ್ ಖಾಕಿ ಚಡ್ಡಿ ಧರಿಸಿದರೆ ಪಾಪ್ಯುಲರ್ ಫ್ರಂಟ್‌ನ ಕಾರ್ಯಕರ್ತರು ಸೈನಿಕರ ಸಮವಸ್ತ್ರ ಧರಿಸಿ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಾರೆ.
ಸಂಘ ಪರಿವಾರದ ನಾಯಕರಂತೆ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಈ ಸಂಘಟನೆಯ ನಾಯಕರ ಮಾತು-ಕೃತಿಗಳಲ್ಲಿ ಧಾರ್ಮಿಕ ಮೂಲಭೂತವಾದದ ವಾಸನೆ ಬಡಿಯುತ್ತಿದೆ. ಮುಸ್ಲಿಂ ಹುಡುಗನ ಜತೆ ಹಿಂದೂ ಹುಡುಗಿ ಕಾಣಿಸಿಕೊಂಡರೆ ಸಂಘ ಪರಿವಾರದ ಸದಸ್ಯರು ದಾಳಿ ಮಾಡಿದರೆ, ಹಿಂದೂ ಹುಡುಗನ ಜತೆ ಮುಸ್ಲಿಂ ಹುಡುಗಿ ಕಾಣಿಸಿಕೊಂಡರೆ ಪಾಪ್ಯುಲರ್ ಫ್ರಂಟ್‌ನ ಕಾರ್ಯಕರ್ತರು ಅದನ್ನೇ ಮಾಡುತ್ತಾರೆ. ಇವರ ದಾಳಿಗಳ ಸಂಖ್ಯೆ ಕಡಿಮೆ ಇರಬಹುದು, ಉದ್ದೇಶದಲ್ಲಿ ವ್ಯತ್ಯಾಸ ಇಲ್ಲ. ಇತ್ತೀಚೆಗೆ ಜಿಲ್ಲೆಯ ಬಜಪೆಯಲ್ಲಿ ನಡೆದ ಘಟನೆಯೇ ಇದಕ್ಕೆ ಸಾಕ್ಷಿ.
ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಮುಸ್ಲಿಮರನ್ನು ವಿರೋಧಿಸುವ ಯಾವ ಅವಕಾಶವನ್ನೂ ಬಿಟ್ಟುಕೊಡದ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಮೂಲಭೂತವಾದಿ ಮುಸ್ಲಿಮರ ಸಂಘಟನೆ ಎಂಬ ಆರೋಪಕ್ಕೊಳಗಾಗಿರುವ `ಪಾಪ್ಯುಲರ್ ಫ್ರಂಟ್' ವಿರುದ್ಧ ಗಟ್ಟಿದನಿಯಲ್ಲಿ ಮಾತನಾಡಿದ್ದು ಕಡಿಮೆ. `ಪಾಪ್ಯುಲರ್ ಫ್ರಂಟ್' ಇಷ್ಟೊಂದು ಪ್ರಮಾಣದಲ್ಲಿ ಬೆಳೆದಿರುವುದೇ ಕಳೆದ ಐದು ವರ್ಷಗಳ ಬಿಜೆಪಿ ಆಡಳಿತ ಕಾಲದಲ್ಲಿ ಎನ್ನುವುದು ಗಮನಾರ್ಹ. ಪೊಲೀಸ್ ಇಲಾಖೆಯನ್ನು ಅಂಗೈಯಲ್ಲಿಟ್ಟುಕೊಂಡಿರುವ ಸಂಘ ಪರಿವಾರದ ನಾಯಕರು ಪಾಪ್ಯುಲರ್ ಫ್ರಂಟ್‌ನ ಬೆಳವಣಿಗೆಯನ್ನು ತಡೆಯುವ ಪ್ರಯತ್ನವನ್ನೇ ಮಾಡಿಲ್ಲ.
ಸರ್ಕಾರದಿಂದ ಯಾವುದೇ ಬಗೆಯ ಕಿರುಕುಳ ಅನುಭವಿಸಿದ ಬಗ್ಗೆ ಪಾಪ್ಯುಲರ್ ಫ್ರಂಟ್ ನಾಯಕರೂ ದೂರಿಲ್ಲ. ಇವರು ಬಿಜೆಪಿಗಿಂತಲೂ ಹೆಚ್ಚಾಗಿ ಕಾಂಗ್ರೆಸ್ ಪಕ್ಷವನ್ನೇ ದಾಳಿಗೆ ಗುರಿ ಮಾಡುತ್ತಿರುವುದು ಕೂಡಾ ನಿಜ. ಇವೆಲ್ಲವನ್ನೂ ನೋಡಿದವರು ಎಲ್ಲೋ ಒಂದು ಕಡೆ ಎರಡೂ ಸಂಘಟನೆಗಳ ನಡುವೆ ಹೊಂದಾಣಿಕೆ ಇದೆಯೇನೋ ಎಂಬ ಸಂಶಯ ವ್ಯಕ್ತ ಪಡಿಸುತ್ತಿರುವುದು ಸಹಜವೇ ಆಗಿದೆ.
ಆರ್‌ಎಸ್‌ಎಸ್ ಮಾಜಿ ನಾಯಕರೊಬ್ಬರ ಜತೆ ಮಾತನಾಡುತ್ತಿದ್ದಾಗ ಅವರೊಂದು ಘಟನೆಯನ್ನು ಹೇಳಿದರು. ನಾಲ್ಕೈದು ತಿಂಗಳ ಹಿಂದೆ ಪಾಪ್ಯುಲರ್ ಫ್ರಂಟ್ ಇಲ್ಲಿನ ನೆಹರೂ ಮೈದಾನದಲ್ಲಿ ಮುಸ್ಲಿಮರ ಬೃಹತ್ ಸಮಾವೇಶವೊಂದನ್ನು ಏರ್ಪಡಿಸಿತ್ತು. ಇದನ್ನು ನೋಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲೆಯ ಸಂಘ ಪರಿವಾರದ ಪ್ರಮುಖ ನಾಯಕರೊಬ್ಬರ ಬಳಿ ಹೋಗಿ ಮುಸ್ಲಿಮರಿಗಿಂತ ದೊಡ್ಡದಾದ ಹಿಂದೂ ಸಮಾಜೋತ್ಸವ ಮಾಡಬೇಕೆಂದು ಒತ್ತಾಯಿಸಿದರಂತೆ.
ಅವರ ಮಾತು ಕೇಳಿ ನಕ್ಕ ಆ ನಾಯಕರು `ಮೂರ್ಖ ನಿನಗೆ ಬುದ್ಧಿ ಇಲ್ಲ, ನಾವೇನೂ ಮಾಡುವುದು ಬೇಡ, ಅವರಿಗೆ ಇನ್ನಷ್ಟು ಸಮ್ಮೇಳನಗಳನ್ನು ಮಾಡಲು ದುಡ್ಡು ಕೊಟ್ಟು ಬಿಡುವ' ಎಂದರಂತೆ. ಮುಸ್ಲಿಮರು ಬಹಿರಂಗವಾಗಿ ಸೇರಿ ಶಕ್ತಿ ಪ್ರದರ್ಶನ ಮಾಡಿದರೆ ಅದರಿಂದ ಅಸುರಕ್ಷತೆಗೀಡಾಗುವ ಹಿಂದೂಗಳು ಇನ್ನಷ್ಟು ಸಂಖ್ಯೆಯಲ್ಲಿ ತಮ್ಮ ಕಡೆ ಬರುತ್ತಾರೆ ಎನ್ನುವುದು ಆ ನಾಯಕರ ತಂತ್ರ. ಪಾಪ್ಯುಲರ್ ಫ್ರಂಟ್‌ನ ನಾಯಕರಲ್ಲಿಯೂ ಈ ಉದ್ದೇಶ ಇದ್ದ ಹಾಗಿದೆ.
ಇದೇ ಪಾಪ್ಯುಲರ್ ಫ್ರಂಟ್‌ನ ರಾಜಕೀಯ ಮುಖ ಎಸ್‌ಡಿಪಿಐ. 2009ರಲ್ಲಿ ಎಸ್‌ಡಿಪಿಐ ಸ್ಥಾಪಿಸಿದಾಗ ಬಹಳ ಮಂದಿ ಇದನ್ನು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಅಲ್ಲಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾಗವಹಿಸಿದ್ದ ಎಸ್‌ಡಿಪಿಐ ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 206 ಕಡೆ ಸ್ಪರ್ಧಿಸಿ ಹದಿನೇಳು ಸ್ಥಾನಗಳನ್ನು ಗೆದ್ದಿರುವುದು ಮಾತ್ರವಲ್ಲ, ಹದಿನೆಂಟು ಕಡೆ ಎರಡನೆ ಸ್ಥಾನ ಪಡೆದ ನಂತರ ರಾಜಕೀಯ ಪಕ್ಷಗಳು ಜಾಗೃತವಾಗಿವೆ.
ಈಗ ರಾಜ್ಯದ 25 ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆಗಿಳಿದಿದ್ದರೂ ಅದು ಗಮನ ಕೇಂದ್ರೀಕರಿಸಿರುವುದು ದಕ್ಷಿಣ ಕನ್ನಡದ ಮೇಲೆ. ಇಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಎಸ್‌ಡಿಪಿಐ, ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ.
ಬಹಿರಂಗವಾಗಿ `ಬಿಜೆಪಿ ಮತ್ತು ಕಾಂಗ್ರೆಸ್ ನಮಗೆ ಸಮಾನ ಶತ್ರುಗಳು' ಎಂದು ಹೇಳುವ ಎಸ್‌ಡಿಪಿಐ ನಾಯಕರು ಖಾಸಗಿಯಾಗಿ `ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸುತ್ತೇವೆ' ಎನ್ನುತ್ತಾರೆ. ಇದು ಎಷ್ಟು ಸಾಧ್ಯವಾಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಅವರ ಕಾರ್ಯತಂತ್ರ ಸ್ಪಷ್ಟ. ಮುಸ್ಲಿಮರ ಮತಗಳನ್ನು ನೆಚ್ಚಿಕೊಳ್ಳದೆ ಇರುವ ಬಿಜೆಪಿಗೆ ಆ ಮತಗಳು ಬರದೆಹೋದರೂ ನಷ್ಟ ಇಲ್ಲ. ಇದೇ ಮಾತನ್ನು ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳಲಾಗದು. ಕೆಲವು ಸಾವಿರದಷ್ಟು ಮುಸ್ಲಿಂ ಮತಗಳನ್ನು ಎಸ್‌ಡಿಪಿಐ ಕಿತ್ತುಕೊಂಡರೂ ಒಂದೆರಡು ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಬುಡಮೇಲಾಗಬಹುದು.
ಉದಾಹರಣೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಎಂಟು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಗೆದ್ದಿತ್ತು. ಮುಸ್ಲಿಂ ಮತಗಳು ಗಣನೀಯ ಸಂಖ್ಯೆಯಲ್ಲಿರುವ ಬಂಟ್ವಾಳದಲ್ಲಿ ಕಾಂಗ್ರೆಸ್ ಪಕ್ಷದ ರಮಾನಾಥ ರೈ ಗೆದ್ದಿರುವುದು ಕೇವಲ 1251 ಮತಗಳಿಂದ. ಈ ಬಾರಿಯೂ ಅಲ್ಲಿ ತುರುಸಿನ ಸ್ಪರ್ಧೆ ಇದೆ. ಈ ಸ್ಥಿತಿಯಲ್ಲಿ ಅಲ್ಲಿ ಕಣದಲ್ಲಿರುವ ಎಸ್‌ಡಿಪಿಐ ಅಭ್ಯರ್ಥಿ ಪಡೆಯುವ ಒಂದೆರಡು ಸಾವಿರ ಮತಗಳು ಕೂಡಾ ಕಾಂಗ್ರೆಸ್ ಪಾಲಿಗೆ ದುಬಾರಿಯಾಗಬಹುದು. ಇದೇ ರೀತಿ ಮುಸ್ಲಿಂ ಮತದಾರರು ನಿರ್ಣಾಯಕ ಸಂಖ್ಯೆಯಲ್ಲಿರುವ ಮಂಗಳೂರು ಕ್ಷೇತ್ರದಲ್ಲಿ ಯು.ಟಿ.ಖಾದರ್ ಗೆದ್ದಿರುವುದು 7149 ಮತಗಳಿಂದ. ಅಲ್ಲಿನ ಎಸ್‌ಡಿಪಿಐ ಅಭ್ಯರ್ಥಿ ಏಳೆಂಟು ಸಾವಿರ ಮತಗಳನ್ನು ಪಡೆದರೆ ಕಾಂಗ್ರೆಸ್ ದೋಣಿ ಮುಳುಗಬಹುದು.
`ತಾತ್ವಿಕವಾಗಿ ನೀವೇ ವಿರೋಧಿಸುತ್ತಿರುವ ಬಿಜೆಪಿಯನ್ನು ನಿಮ್ಮ ಸ್ಪರ್ಧೆಯಿಂದಾಗಿ ಗೆಲ್ಲಿಸಿದ ಹಾಗಾಗುವುದಿಲ್ಲವೇ? ಬಿಜೆಪಿ ಜತೆ ಇಂತಹದ್ದೊಂದು ಗುಪ್ತ ಹೊಂದಾಣಿಕೆಯನ್ನೂ ನೀವು ಮಾಡಿಕೊಂಡಿದ್ದೀರಿ ಎಂಬ ಆರೋಪವೂ ಇದೆ ಅಲ್ಲವೇ?' ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಅವರನ್ನು ಕೇಳಿದರೆ `ಅಂತಹ ಆರೋಪಗಳಿಗೆ ಯಾವ ಆಧಾರವೂ ಇಲ್ಲ. ಈ ಚುನಾವಣೆಯಲ್ಲಿ ಹಾಗೆ ಅನಿಸಲೂಬಹುದು. ಆದರೆ ಇದರಿಂದಾಗಿ ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳಿಗೆ ಪರ್ಯಾಯವಾಗಿ ನಾವು ಬೆಳೆಯಲು ಸಾಧ್ಯವಾಗುತ್ತದೆ' ಎಂದರು.
`ಅವರ ಉದ್ದೇಶ ಸ್ಪಷ್ಟ. ಅದು ಮೂಲಭೂತವಾದಿಗಳ ಜತೆಯಲ್ಲಿ ಕೈಜೋಡಿಸಿ ಜಾತ್ಯತೀತ ಶಕ್ತಿಗಳನ್ನು ಸೋಲಿಸುವುದು. ಇಂತಹ ಕುತಂತ್ರಗಳಿಗೆ ಮುಸ್ಲಿಮರು ಬಲಿಯಾಗಲಾರರು' ಎಂಬ ವಿಶ್ವಾಸ ವ್ಯಕ್ತಪಡಿಸಿದವರು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶದ ನಂತರ ಗೆಲುವಿನ ಸಂಭ್ರಮದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಒಂದೆಡೆ ಟಿಕೆಟ್ ವಂಚಿತರ ಬಂಡಾಯ ಬೆದರಿಸುತ್ತಿದ್ದರೆ ಇನ್ನೊಂದೆಡೆ ಎಸ್‌ಡಿಪಿಐ ಭೂತ ಕಾಡುತ್ತಿದೆ.

Tuesday, April 23, 2013

ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಕರಾವಳಿ ಮಹಿಳೆಯರು

ಮಂಗಳೂರು: `ಯಾನ್ ಕಾಲೇಜ್‌ಗ್ ಪೋನಗನೆ ಮಿಡಿ-ಮಿನಿ ಪಾಡೊಂದಿತ್ತೆ. ವುಂದು ದಾನೆ ಪೊಸತ್ತಾ ಎಂಕಲೆಗ್? ಇತ್ತೆ ಎನ್ನ ಮಗಲ್ ಆ ಡ್ರೆಸ್ ಪಾಡುನಿ ಬೊಡ್ಚಿಂದ್ ಎಂಚ ಪನ್ಪಿನಿ?' (
ನಾನು ಕಾಲೇಜಿಗೆ ಹೋಗುವಾಗಲೇ ಮಿನಿ-ಮಿಡಿ ಧರಿಸುತ್ತಿದ್ದೆ. ಇದೇನು ನಮಗೆ ಹೊಸದಾ? ಈಗ ನನ್ನ ಮಗಳು ಧರಿಸುವಾಗ ಬೇಡ ಎಂದು ಹೇಗೆ ಹೇಳಲಿ) ಎಂದು ಕೇಳುತ್ತಾರೆ ಸುಮಾರು ಐವತ್ತರ ಆಜುಬಾಜಿನಲ್ಲಿರುವ ಸುರತ್ಕಲ್‌ನ ಶಶಿಕಲಾ ಶೆಟ್ಟಿ.
`ಎಂಕುಲ್‌ದಾನೆ ಹಾಳಾದ್ ಪೋತನಾ, ಗೌರವೊಡು ಸಂಸಾರ ಮಲ್ತೊಂದ್ ಇಜ್ಜನಾ' (ನಾವೇನು ಹಾಳಾಗಿ ಹೋಗಿದ್ದೇವೆಯೇ? ಗೌರವದಿಂದ ಸಂಸಾರ ಮಾಡಿಕೊಂಡು ಇಲ್ಲವೇ?) ಎನ್ನುವ ಇನ್ನೆರಡು ಪ್ರಶ್ನೆಗಳನ್ನೂ ಕೇಳಿ ಯಾರದೋ ಮೇಲಿನ ಸಿಟ್ಟನ್ನು ಅವರು ತೀರಿಸಿಕೊಂಡರು.
ಇದು ಇಲ್ಲಿನ ಒಬ್ಬಿಬ್ಬರು ಹೆಣ್ಣುಮಕ್ಕಳ ವೈಯಕ್ತಿಕ ಅಭಿಪ್ರಾಯ ಅಲ್ಲ, ಅತಿರೇಕಕ್ಕೆ ಹೋಗುತ್ತಿರುವ `ನೈತಿಕ ಪೊಲೀಸ್‌ಗಿರಿ'ಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುಸಂಖ್ಯಾತ ಮಹಿಳೆಯರು ರೋಸಿಹೋಗಿದ್ದಾರೆ.
`ವುಂದ್ ಮುಲ್ತ ಕಲ್ಚರ್‌ಗ್ ಇನ್‌ಸಲ್ಟ್‌ಯೇ ಅಣ್ಣಾ' (ಇದು (ನೈತಿಕ ಪೊಲೀಸ್‌ಗಿರಿ) ಇಲ್ಲಿನ ಸಂಸ್ಕೃತಿಗೆ ಅವಮಾನ) ಎಂದವಳು ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ರಾಜಶ್ರೀ ಬಂಗೇರ. `ಅಣ್ಣಾ, ಅಕ್ಕಾ ಸಂಬೋಧನೆ, ಇಂಗ್ಲಿಷ್‌ಮಿಶ್ರಿತ ತುಳು' ಕೂಡಾ ಇಲ್ಲಿನ ಸಂಸ್ಕೃತಿಯ ಭಾಗ. ಚುನಾವಣೆಯಲ್ಲಿ ರಾಜಕೀಯವೇ ಚರ್ಚೆಯ ಪ್ರಮುಖ ವಿಷಯವಾದರೂ ಇತ್ತೀಚಿನ ವರ್ಷಗಳಲ್ಲಿ ಮೊದಲ ಬಾರಿ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಂಸ್ಕೃತಿ ಕೂಡಾ ಚರ್ಚೆಗೊಳಗಾಗುತ್ತಿದೆ.
ಕರಾವಳಿಯ ಹೆಣ್ಣುಮಕ್ಕಳು ಮನೆಯಿಂದ ಹೊರಗೆ ಕಾಲಿಟ್ಟು ದಶಕಗಳೇ ಕಳೆದಿವೆ. ಇಲ್ಲಿನ ಮೀನುಗಾರ ಮಹಿಳೆಯರು ಊರೂರಿಗೆ ಬುಟ್ಟಿಯಲ್ಲಿ  ಹೊತ್ತುಕೊಂಡು ಹೋಗಿ ಇಲ್ಲವೆ ಸಂತೆಯಲ್ಲಿ ಕೂತು ಮೀನು ಮಾರಿಯೇ ಕುಟುಂಬವನ್ನು ಸಲಹುತ್ತಾ ಬಂದವರು. ಇವರ ಜತೆಗೆ ಬೀಡಿಕಟ್ಟುವ ಮಹಿಳೆಯರು, ತರಕಾರಿ ಬೆಳೆದು ಮಾರುವ ಕ್ರಿಶ್ಚಿಯನ್ ಮಹಿಳೆಯರು...ಹೀಗೆ ಕರಾವಳಿಯ ಉದ್ಯೋಗಸ್ಥ ಮಹಿಳಾವರ್ಗ ವಿಶಾಲವಾದುದು.
ಇವರೆಲ್ಲ ಉದ್ಯೋಗಕ್ಕಾಗಿ ಮನೆಬಿಟ್ಟು ಹೊರಗೆ ಅಡ್ಡಾಡುವವರು. ಬೆಂಗಳೂರು ನಗರವನ್ನು ಹೊರತುಪಡಿಸಿದರೆ ಇಡೀ ರಾಜ್ಯದಲ್ಲಿ ಉದ್ಯೋಗಸ್ಥ ಮಹಿಳೆಯರು ಅತಿಹೆಚ್ಚಿನ ಸಂಖ್ಯೆಯಲ್ಲಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎಂದು ಹೇಳಲು ಸಮೀಕ್ಷೆಯ ಅಗತ್ಯ ಇಲ್ಲ. ಹೊರಜಗತ್ತಿನ ಪರಿಚಯ ಇರುವುದರಿಂದ ಆಧುನಿಕತೆಯ ಗಾಳಿಗೆ ಇವರೆಲ್ಲ ಎಂದೋ ಮೈಯೊಡ್ಡಿಯಾಗಿದೆ.
ಜಗತ್ತಿನ ಯಾವುದೋ ಮೂಲೆಯಲ್ಲಿ ಹೊಸ ಫ್ಯಾಷನ್ ಬಂದರೂ ಅದು ಮುಂಬೈ-ದುಬೈ ಮೂಲಕ ರಾಜ್ಯದಲ್ಲಿ ಮೊದಲು ಬರುತ್ತಿದ್ದದ್ದು ಮಂಗಳೂರಿಗೆ. ಬಾರ್ ಎಂಡ್ ರೆಸ್ಟೋರೆಂಟ್‌ಗಳಲ್ಲಿ ಗಂಡ ಬಿಯರ್ ಕುಡಿಯುತ್ತಿರುವಾಗ ಎದುರಿಗೆ ಹೆಂಡತಿ ಕೂತು ಊಟ ಮಾಡುವುದು ಇಲ್ಲಿ ಸಾಮಾನ್ಯ ದೃಶ್ಯ. ಮಂಗಳೂರಿನ ಹೆಣ್ಣುಮಕ್ಕಳು ಸ್ಪಲ್ಪ `ಫಾಸ್ಟ್' ಎನ್ನುವ ಅಭಿಪ್ರಾಯ ಹಿಂದಿನಿಂದಲೂ ಇದೆ. ಆದರೆ ತಮ್ಮ ಭವಿಷ್ಯದ ವಿಷಯದಲ್ಲಿ ತೀರಾ ಲೆಕ್ಕಾಚಾರದ ಈ ಹೆಣ್ಣುಮಕ್ಕಳು ಅತಿರೇಕಕ್ಕೆ ಹೋಗಿ ವೈಯಕ್ತಿಕ ಜೀವನವನ್ನು ಹಾಳುಮಾಡಿಕೊಂಡದ್ದು ಕಡಿಮೆ.
ಇಂತಹ ನಾಡಿನಲ್ಲಿ  ಹಿಂದೂ ಸಂಸ್ಕೃತಿಯ ರಕ್ಷಣೆಯ ಹೆಸರಲ್ಲಿ ನಡೆಸಲಾಗುತ್ತಿರುವ ನೈತಿಕ ಪೊಲೀಸ್‌ಗಿರಿ  ಪ್ರಜ್ಞಾವಂತ ಸಮುದಾಯವನ್ನು ಕೆರಳಿಸಿದೆ. ಹೆಚ್ಚುಕಡಿಮೆ ಪ್ರತಿದಿನ ಒಂದಲ್ಲ ಒಂದು ಸ್ಥಳದಲ್ಲಿ ಪರಸ್ಪರ ಮಾತನಾಡುತ್ತಿರುವ ಇಲ್ಲವೆ ಜತೆಯಲ್ಲಿ ಹೋಗುವ ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ಮೇಲೆ ಹಲ್ಲೆ ನಡೆಯುತ್ತಿರುತ್ತದೆ. ಕಾನೂನು ಪ್ರಕಾರ ಇದನ್ನು ಅಪರಾಧ ಎಂದು ಪರಿಗಣಿಸಲು ಅಸಾಧ್ಯವಾಗಿರುವ ಕಾರಣ ಅಧಿಕೃತವಾಗಿ ದೂರು ದಾಖಲಾಗುವುದು ಕಡಿಮೆ.
ದೈಹಿಕವಾಗಿ ಹಲ್ಲೆ ನಡೆಸುವ ಮತ್ತು ಪೊಲೀಸರ ಮೂಲಕ ಹೆದರಿಸುವ ಕೃತ್ಯಗಳು ನಡೆಯುತ್ತಲೇ ಇವೆ. ಸಂಘ ಪರಿವಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದರ ವಿರುದ್ಧ ಬಿಜೆಪಿಯ ಸಾಂಪ್ರದಾಯಿಕ ಬೆಂಬಲಿಗ ಕುಟುಂಬಗಳ ಮಹಿಳೆಯರೇ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲು ಇದಕ್ಕೆ ಸಾಕ್ಷಿ.
ಸಂಘ ಪರಿವಾರದ ಚುನಾವಣಾ ಕಾರ್ಯತಂತ್ರದ ದೋಣಿ ಪ್ರತಿಕೂಲ ಗಾಳಿಗೆ ಸಿಕ್ಕಿ ಅಡಿಮೇಲಾಗುತ್ತಿರುವುದು ಈ ಬೆಳವಣಿಗೆಗಳಿಂದಾಗಿ. ಕಾಂಗ್ರೆಸ್ ಪಕ್ಷದ ನಾಯಕರು ಗೆದ್ದೇಬಿಟ್ಟೆವು ಎಂದು ಮೈಮರೆಯಲು ಕೂಡಾ ಇದು ಕಾರಣ. ಇದಕ್ಕೆ ಸರಿಯಾಗಿ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿಯವರು ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಸಿದ ವಿಧವೆಯರಿಗೆ ಮಂಗಳದ್ರವ್ಯ ನೀಡುವ ಮತ್ತು ದಲಿತ ಮಹಿಳೆಯರ ಪಾದತೊಳೆದ ಕೆಲಸಗಳು ಸಂಘ ಪರಿವಾರ ಮಹಿಳೆಯರ ಮೇಲೆ ನಡೆಸುತ್ತಿರುವ `ಸಾಂಸ್ಕೃತಿಕ ದಾಳಿ'ಗೆ ಪ್ರತಿದಾಳಿ ಎಂಬಂತೆ ಜನಪ್ರಿಯವಾಗಿವೆ.
ಪೂಜಾರಿಯವರೂ ಕಡು ಜಾತ್ಯತೀತರೇನಲ್ಲ, ಮಂಗಳೂರಿನಲ್ಲಿ ಬಿಜೆಪಿಯನ್ನು `ಮೆದು ಹಿಂದುತ್ವ'ದ ಮೂಲಕವೇ ಎದುರಿಸಲು ಹೊರಟವರು ಅವರು. ಸಂಘ ಪರಿವಾರವನ್ನು ಮೀರಿಸುವಂತೆ ಪ್ರತಿವರ್ಷ ದಸರಾ ಉತ್ಸವ ಆಚರಿಸುವ ಮೂಲಕ ಮನೆಯಲ್ಲಿದ್ದ ಧರ್ಮವನ್ನು ಬೀದಿಗೆ ತಂದು ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪ ಕೂಡಾ ಅವರ ಮೇಲಿದೆ. ಧಾರ್ಮಿಕವಾಗಿ ಪುರುಷರಿಗೆ ಸಮನಾದ ಸ್ಥಾನಮಾನವನ್ನು ಮಹಿಳೆಯರಿಗೆ ನೀಡಿ ಗೌರವಿಸುವುದನ್ನು ಒಂದು ಸೈದ್ಧಾಂತಿಕ ವಿರೋಧದ ಕಾರ್ಯಕ್ರಮ ಎಂದು ಅವರು ರೂಪಿಸದೆ ಇದ್ದರೂ ವರ್ತಮಾನದ ಪರಿಸ್ಥಿತಿಯಿಂದಾಗಿ ಅದು ಆ ರೂಪ ಪಡೆದಿದೆ.
ಇತ್ತೀಚಿನ ವರ್ಷಗಳಲ್ಲಿ ಸಂಖ್ಯೆ ಮತ್ತು ಸಂಪನ್ಮೂಲಗಳೆರಡರ ದೃಷ್ಟಿಯಿಂದಲೂ ಬಿಜೆಪಿಗೆ ಪ್ರಮುಖ ಆಧಾರಸ್ತಂಭವಾಗಿದ್ದ ಬಂಟ ಸಮಾಜದ ಮಹಿಳೆಯರೇ, ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡ ನಡೆದಿರುವ `ನೈತಿಕ ಪೊಲೀಸ್‌ಗಿರಿ'ಯಿಂದ ಹೆಚ್ಚು ಅಸಮಾಧಾನಕ್ಕೀಡಾಗಿರುವುದು ಗಮನಾರ್ಹ. ಭೂಸುಧಾರಣೆ ಜಾರಿಗೆ ಬರುವ ಮೊದಲು ಭೂಮಾಲೀಕರಾಗಿದ್ದ ಬಂಟರು ಹಿಂದೂ ಸಮುದಾಯದಲ್ಲಿ ಉಳಿದವರಿಗಿಂತ ಮೊದಲು ಆಧುನಿಕತೆಗೆ ತೆರೆದುಕೊಂಡವರು.
ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಮೊದಲಾದ ಚಿತ್ರತಾರೆಯರೆಲ್ಲ `ಬೋಲ್ಡ್ ಎಂಡ್ ಬ್ಯೂಟಿಫುಲ್' ಎಂದೇ ಕರೆಯಲಾಗುವ ಬಂಟ ಮಹಿಳಾ ಸಮುದಾಯಕ್ಕೆ ಸೇರಿದವರು. ಉದ್ಯಮಶೀಲತೆಯ ಗುಣವನ್ನು ಹುಟ್ಟಿನಿಂದಲೇ ಪಡೆದಿರುವ ಈ ಸಮುದಾಯ ಹೋಟೆಲ್, ವೈದ್ಯಕೀಯ, ಎಂಜಿನಿಯರಿಂಗ್ ಮೊದಲಾದ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಯಿಂದಾಗಿ ಸಹಜವಾಗಿ ಶ್ರಿಮಂತಿಕೆಯ ಜೀವನಶೈಲಿಗೆ ಒಗ್ಗಿಹೋಗಿರುವವರು. ಇವರ ಮೇಲೆ ಬಲವಂತದಿಂದ ಹೇರಲಾಗುತ್ತಿರುವ ನಿರ್ಬಂಧಿತ ಸಾಮಾಜಿಕ ಜೀವನ ಸಹಜವಾಗಿಯೇ ಕಿರಿಕಿರಿ ಉಂಟುಮಾಡುತ್ತಿದೆ.
ಪಾಶ್ಚಾತ್ಯ ಸಂಸ್ಕೃತಿ ಕೂಡಾ ಇಲ್ಲಿಗೆ ಇತ್ತೀಚಿನ ಆಮದು ಅಲ್ಲ. ಇಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಕ್ರೈಸ್ತ ಸಮುದಾಯದ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಮೊದಲಿನಿಂದಲೂ ಇದೆ. 60 ವರ್ಷದ ಮಹಿಳೆ ಕೂಡಾ ಸ್ಕರ್ಟ್ ಧರಿಸುವುದು, ಮನೆಯಲ್ಲಿ ಕುಟುಂಬದ ಜತೆ ಮಹಿಳೆಯರೂ ಮದ್ಯ ಸೇವಿಸುವುದು ಇಲ್ಲಿನ ಕ್ರಿಶ್ಚಿಯನ್ ಸಮಾಜದಲ್ಲಿ ಸಾಮಾನ್ಯ ನಡವಳಿಕೆ.
ಇದರ ಪ್ರಭಾವ ಇತರ ಸಮುದಾಯದ ಮೇಲೆ ಕೂಡಾ ಆಗಿದೆ. `ಈ ರೀತಿಯ ನಡವಳಿಕೆಗಳಲ್ಲಿ ಸರಿ-ತಪ್ಪುಗಳ ಮಧ್ಯೆ ಸೂಕ್ಷ್ಮ ಗೆರೆ ಇರುತ್ತದೆ. ಮನೆಯ ಮಕ್ಕಳು ಎಚ್ಚರತಪ್ಪಿ ತಪ್ಪಿನ ಕಡೆ ಸರಿದಾಗ ಬುದ್ಧಿಹೇಳುವ, ಶಿಕ್ಷಿಸುವ ಕೆಲಸವನ್ನು ಲೋಕದ ಎಲ್ಲ ಪಾಲಕರಂತೆ ಇಲ್ಲಿನ ತಂದೆತಾಯಿಗಳು ಮಾಡುತ್ತಾ ಬಂದಿದ್ದಾರೆ. ಆದರೆ ನಮ್ಮ ಮನೆಮಕ್ಕಳ ಮೇಲೆ ಯಾರೋ ಅಪರಿಚಿತರು ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ದಾಳಿ ನಡೆಸುವುದನ್ನು ಸಹಿಸಲಿಕ್ಕಾಗದು' ಎನ್ನುತ್ತಾರೆ ಮಂಗಳೂರಿನ ಶಿಕ್ಷಕ ರಮಾನಂದ.
ಈ ರೀತಿ ದಂಡಪ್ರಯೋಗದ ಮೂಲಕ `ಬುದ್ಧಿಕಲಿಸಲು' ಹೊರಟವರಲ್ಲಿ ಯಾರೂ ಕಾವಿತೊಟ್ಟ ವಿರಾಗಿಗಳಿಲ್ಲ, ಇವರಲ್ಲಿ ಹೆಚ್ಚಿನವರು ಪೊಲೀಸ್ ದಾಖಲೆಯಲ್ಲಿರುವ ಪುಂಡು ಪೋಕರಿಗಳು ಮತ್ತು ಸಂಘ ಪರಿವಾರದ ಸದಸ್ಯರು ಎನ್ನುವುದು ಇವರನ್ನು ಇನ್ನಷ್ಟು ಕೆರಳಿಸಿದೆ.
ಶೂದ್ರ ಸಂಸ್ಕೃತಿಯ ತುಳುನಾಡಿನಲ್ಲಿ  ವೈದಿಕ ಸಂಸ್ಕೃತಿಯ ವಿರುದ್ಧದ ಪ್ರತಿಭಟನೆ ನಿರಂತರವಾಗಿ ನಡೆಯುತ್ತಾ ಬಂದಿರುವುದನ್ನು ತುಳುನಾಡಿನ ಇತಿಹಾಸದಲ್ಲಿ ಕಾಣಬಹುದು. ಒಂದು ಕಾಲದಲ್ಲಿ `ಸೋಷಿಯಲ್ ಆ್ಯಕ್ಟಿವಿಸ್ಟ್'ಗಳಾಗಿದ್ದ ಭೂತ-ದೈವಗಳ ಕತೆಯೇ ಇದಕ್ಕೆ ಸಾಕ್ಷಿ. ಇಲ್ಲಿನ ಬಹುಸಂಖ್ಯಾತ ಹಿಂದೂ ಸಮುದಾಯ ಆರಾಧಿಸುತ್ತಾ ಬಂದಿರುವ ಈ ಭೂತ-ದೈವಗಳೆಲ್ಲ ತಮ್ಮ ಭಕ್ತರಂತೆಯೇ ಮಾಂಸ-ಮೀನು ತಿನ್ನುವ, ಶೇಂದಿ-ಮದ್ಯ (ಇತ್ತೀಚೆಗೆ ಬೀರು-ವಿಸ್ಕಿ) ಕುಡಿಯುವ ವರ್ಗಕ್ಕೆ ಸೇರಿರುವುದರಿಂದ ಅವುಗಳ ಆರಾಧನೆಯ ಸಮಯದಲ್ಲಿ ಅದನ್ನೇ ಹರಕೆ ಮೂಲಕ ಅರ್ಪಿಸಲಾಗುತ್ತದೆ.
ಈ ಎರಡು ಜಿಲ್ಲೆಗಳಲ್ಲಿ ರಾಮ, ಕೃಷ್ಣ, ಶಿವನಿಗಿಂತ ಜುಮಾದಿ, ಕೋರ‌್ದಬ್ಬು-ತನ್ನಿಮಾನಿಗಾ, ಪಂಜುರ್ಲಿಗಳೇ ಹೆಚ್ಚು ಜನಪ್ರಿಯ. ಪುರುಷಪ್ರಧಾನ ಸಮಾಜದಲ್ಲಿನ ಲಿಂಗ ಅಸಮಾನತೆ ಬಗ್ಗೆ ಸಿಡಿದೆದ್ದ ಸಿರಿ, ತನ್ನಿಮಾನಿಗಾ ಮೊದಲಾದ ವೀರಮಹಿಳೆಯರ ಕತೆಗಳು ಇಲ್ಲಿನ ಜಾನಪದ ಸಾಹಿತ್ಯವಾದ ಪಾಡ್ದನಗಳಲ್ಲಿ ಸಿಗುತ್ತವೆ. ಇವರನ್ನು `ಶುದ್ಧ ಹಿಂದೂ'ಗಳಾಗಿ ಮತಾಂತರ ಮಾಡುವ ಪ್ರಯತ್ನದ ಅಂಗವಾಗಿಯೇ ಇಲ್ಲಿನ ಭೂತಕೋಲ, ನಾಗಮಂಡಲ ನಡೆಯುವ ಸ್ಥಳದಲ್ಲಿ ಭಗವಾಧ್ವಜಗಳು ಹಾರಾಡುತ್ತಿರುತ್ತವೆ. `ಮುಸ್ಲಿಂ ಭೂತ'ವನ್ನು ತೋರಿಸಿ ಅವರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ.
ಆದರೆ  ಸಾಂಸ್ಕೃತಿಕ ವಿಸ್ಮೃತಿಗೆ ಒಳಗಾಗಿದ್ದ ಇಲ್ಲಿನ ಶೂದ್ರ ಸಮುದಾಯ ಕರಾವಳಿಯ ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದಾಗಿ ಎಚ್ಚೆತ್ತುಕೊಳ್ಳುತ್ತಿರುವಂತೆ ಕಾಣುತ್ತಿದೆ. ಪರಾಕಾಷ್ಠೆ ತಲುಪಿರುವ `ನೈತಿಕ ಪೊಲೀಸ್‌ಗಿರಿ'ಯ ಜತೆಯಲ್ಲಿಯೇ ಬಿಜೆಪಿ ಶಾಸಕರೊಬ್ಬರ ಮೇಲೆ ಬ್ಲೂಫಿಲ್ಮ್ ವೀಕ್ಷಣೆಯ ಆರೋಪ, ಇನ್ನೊಬ್ಬ ಶಾಸಕರ ಪತ್ನಿಯ ನಿಗೂಢ ಸಾವು ಮತ್ತು ಬೇರೆ ಹೆಣ್ಣಿನ ಜತೆಗಿದ್ದ ವಿಡಿಯೊ, ರೇವ್‌ಪಾರ್ಟಿಯ ಕಿರಿಕಿರಿ ಮೊದಲಾದ ಘಟನೆಗಳಿಂದಾಗಿ ಬಿಜೆಪಿ ವಿಶ್ವಾಸದ್ರೋಹ ಮಾಡಿದೆ ಎಂಬ ಭಾವನೆ ಮುಖ್ಯವಾಗಿ ಕರಾವಳಿಯ ಮಹಿಳೆಯರಲ್ಲಿ ಮೂಡಲು ಕಾರಣವಾಗಿದೆ. ಈ ಅಸಮಾಧಾನ ರಾಜಕೀಯ ನಿರ್ಧಾರವಾಗಿ ಪರಿವರ್ತನೆಗೊಂಡರೆ ಕರಾವಳಿಯ `ಹಿಂದುತ್ವದ ಪ್ರಯೋಗ ಶಾಲೆ'ಯನ್ನು ಮುಚ್ಚಬೇಕಾಗಬಹುದು.

Monday, April 22, 2013

ರೇವಣ್ಣರನ್ನು ಕಾಡುತ್ತಿರುವ ಪುಟ್ಟಸ್ವಾಮಿಗೌಡ `ಭೂತ'

ಹೊಳೆನರಸಿಪುರ (ಹಾಸನ ಜಿಲ್ಲೆ): ಸ್ಥಳೀಯ ಶಾಸಕರು ಯಾರೆಂದು ಗೊತ್ತಿಲ್ಲದೆ ಹೊಳೆನರ
ಸಿಪುರ ಕ್ಷೇತ್ರದ ಉದ್ದಗಲಕ್ಕೆ ಅಡ್ಡಾಡಿದ ಅಪರಿಚಿತರು ಅಲ್ಲಿನ ಶಾಸಕರನ್ನು ಮರು ಆಯ್ಕೆ ಮಾಡುವಂತೆ ಮತದಾರರಿಗೆ ಶಿಫಾರಸು ಮಾಡಲೂ ಬಹುದು. ಪಟ್ಟಣದಲ್ಲಿ ಮಾತ್ರವಲ್ಲ ಹಳ್ಳಿಹಳ್ಳಿಗಳಲ್ಲಿಯೂ ಕಾಂಕ್ರೀಟು ರಸ್ತೆಗಳು, ವಿದ್ಯುತ್ ಸಬ್‌ಸ್ಟೇಷನ್‌ಗಳು, ಸುಸಜ್ಜಿತ ಆಸ್ಪತ್ರೆ, ನರ್ಸಿಂಗ್‌ನಿಂದ ಪಾಲಿಟೆಕ್ನಿಕ್ ವರೆಗೆ,ಕಾನೂನಿನಿಂದ ಗೃಹವಿಜ್ಞಾನದ ವರೆಗೆ ಶಿಕ್ಷಣ ಸಂಸ್ಥೆಗಳು, ಕ್ಷೇತ್ರದ ಬಹಳಷ್ಟು ವಿದ್ಯಾವಂತ ಯುವಕ-ಯುವತಿಯರಿಗೆ ಸರ್ಕಾರಿ ಉದ್ಯೋಗ... ಇನ್ನೇನು ಬೇಕು?
ಒಂದು ವಿಧಾನಸಭಾ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡಬಹುದೆಂಬುದಕ್ಕೆ ಹೊಳೆನರಸಿಪುರ ಮಾದರಿಯಂತಿದೆ. ಇಷ್ಟೆಲ್ಲ ಅಭಿವೃದ್ಧಿಯ ಚಿತ್ರವನ್ನು ನೋಡಿ ಸಂಭ್ರಮ ಪಟ್ಟವರ ಅಭಿಪ್ರಾಯ ಇಲ್ಲಿನ ಶಾಸಕರ ಹೆಸರು ಹರದನಹಳ್ಳಿ ದೇವೇಗೌಡ ರೇವಣ್ಣ ಎಂದು ಗೊತ್ತಾದ ಕೂಡಲೇ ಬದಲಾಗಲೂಬಹುದು.
ತಪ್ಪು ರೇವಣ್ಣ ಅವರದ್ದಲ್ಲ, ದೊಡ್ಡ ರಾಜಕೀಯ ಕುಟುಂಬದಿಂದ ಬಂದ ವ್ಯಕ್ತಿಯ ಹೆಗಲಮೇಲೆ ಆ ಪರಂಪರೆಯ ಹೊರೆ ಇದ್ದೇ ಇರುತ್ತದೆ. ರೇವಣ್ಣ  ಅವರು ಹೊಳೆನರಸಿಪುರದ ಶಾಸಕ ಎನ್ನುವುದಕ್ಕಿಂತಲೂ ಮುಖ್ಯವಾಗಿರುವುದು ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತಮ್ಮ ಎನ್ನುವುದು.
ಆದುದರಿಂದ ಎಲ್ಲರೂ ಅದೇ ವಂಶಪರಂಪರೆಯ ಕನ್ನಡಕದಲ್ಲಿಯೇ ಅವರನ್ನು ನೋಡುತ್ತಾರೆ. ಮತಹಾಕುವವರ ತಲೆಯಲ್ಲಿ ರೇವಣ್ಣ ಮಾತ್ರ ಇಲ್ಲ ಇಡೀ ದೇವೇಗೌಡರ ಕುಟುಂಬ ಇರುತ್ತದೆ. ಹೊಳೆನರಸಿಪುರ ಎಂಬ ವಿಧಾನಸಭಾ ಕ್ಷೇತ್ರ ಎನ್ನುವುದು ಒಂದು ರೀತಿ ಇಂದಿರಾಗಾಂಧಿ ಕುಟುಂಬಕ್ಕೆ ರಾಯಬರೇಲಿ ಎಂಬ ಲೋಕಸಭಾ ಕ್ಷೇತ್ರ ಇದ್ದ ಹಾಗೆ.
ಸ್ವಾತಂತ್ರ್ಯಾನಂತರ ಈ ಕ್ಷೇತ್ರದಲ್ಲಿ ನಡೆದ ಹದಿಮೂರು ಚುನಾವಣೆಗಳಲ್ಲಿ ನಾಲ್ಕು ಬಾರಿ ಬಿಟ್ಟರೆ ಉಳಿದೆಲ್ಲ ಸಲ ಗೆದ್ದದ್ದು ದೇವೇಗೌಡರ ಕುಟುಂಬ. ದೇವೇಗೌಡರು ಆರುಬಾರಿ ಮತ್ತು ರೇವಣ್ಣ ಮೂರು ಬಾರಿ ಗೆದ್ದಿದ್ದಾರೆ. ರಾಜಕೀಯ ಪ್ರವೇಶದ ಪ್ರಾರಂಭದಲ್ಲಿ ದೇವೇಗೌಡರು ಪಕ್ಷೇತರರಾಗಿ ಇಲ್ಲಿ ಎರಡು ಬಾರಿ ಗೆದ್ದಿದ್ದರು.
ಇಷ್ಟು ಸುರಕ್ಷಿತವಾಗಿದ್ದ ಕ್ಷೇತ್ರವನ್ನು ರೇವಣ್ಣ ಅವರು ಬೆಂಗಳೂರಿನಲ್ಲಿಯೇ ಕೂತು ಗೆಲ್ಲಬೇಕಾಗಿತ್ತು. ಆದರೆ ಅವರು ಪತ್ನಿ ಮತ್ತು ಮಗನ ಜತೆ ಬಂದು ಇಲ್ಲಿ ರಾತ್ರಿಹಗಲು ಬೆವರು ಸುರಿಸುತ್ತಿದ್ದಾರೆ. `ಚುನಾವಣೆಯ ಕಾಲದಲ್ಲಿ ಮಾತ್ರವಲ್ಲ ಬಾಕಿ ದಿನಗಳಲ್ಲಿಯೂ ವಾರಕ್ಕೆರಡು ದಿನ ತಪ್ಪದೆ ಇಲ್ಲಿಗೆ ಬರುತ್ತೇನೆ' ಎಂದರು ಹೊಳೆನರಸಿಪುರದ ತಮ್ಮ ಮನೆಯಲ್ಲಿ ಕೂತಿದ್ದ ರೇವಣ್ಣ. ಪತ್ನಿ ಭವಾನಿ ಪಕ್ಷದ ಕಾರ್ಯಕರ್ತರನ್ನು ಉಪಚರಿಸುತ್ತಾ ಮನೆ ತುಂಬಾ ಓಡಾಡುತ್ತಿದ್ದರು.
ಇವರನ್ನು ಕಾಡುತ್ತಿರುವ ಅಸುರಕ್ಷತೆಯನ್ನು ಅರ್ಥಮಾಡಿಕೊಳ್ಳಬೇಕಾದರೆ ಈ ಕ್ಷೇತ್ರದ ರಾಜಕೀಯ ಇತಿಹಾಸವನ್ನು ತಿಳಿದುಕೊಳ್ಳಬೇಕು. ಅಭಿವೃದ್ಧಿಯ ವಿಷಯ ಈಗಲೂ ಇಲ್ಲಿ ಚುನಾವಣಾ ಚರ್ಚಾ ವಸ್ತು ಅಲ್ಲ.  ಇನ್ನಷ್ಟು ಸೂಕ್ಷ್ಮವಾಗಿ ನೋಡಿದರೆ ಇಲ್ಲಿ ಅಭ್ಯರ್ಥಿಗಳಾಗಿರುವ ರೇವಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಸ್.ಜಿ. ಅನುಪಮ ಕೂಡಾ ಪ್ರಧಾನ ಪಾತ್ರಧಾರಿಗಳಲ್ಲ. ಇವರಿಬ್ಬರ ಹಿನ್ನೆಲೆಯಲ್ಲಿ ಕ್ರಮವಾಗಿ ಅವರಿಬ್ಬರ ಅಪ್ಪ ಮತ್ತು ಮಾವನ ರಾಜಕೀಯದ ನೆರಳಿದೆ.
ಪುಟ್ಟಸ್ವಾಮಿಗೌಡರು ಜೀವಂತ ಇರುವ ವರೆಗೆ ಹೊಳೆನರಸಿಪುರ ಕ್ಷೇತ್ರದಲ್ಲಿ ದೇವೇಗೌಡರ ಏಕಚಕ್ರಾಧಿಪತ್ಯಕ್ಕೆ ಸವಾಲೊಡ್ಡುತ್ತಲೇ ಇದ್ದವರು. ಪ್ರಾರಂಭದ ದಿನದ ಸ್ನೇಹವನ್ನು ಕಡಿದುಕೊಂಡು ದೇವೇಗೌಡರಿಂದ ಅವರು ದೂರವಾದ ನಂತರ ಈ ಕ್ಷೇತ್ರದ ಚುನಾವಣೆ ಎಂದರೆ  ಇಬ್ಬರು ಗೌಡರ ನಡುವಿನ ಕಾಳಗ ಎಂದೇ ಪರಿಗಣಿಸಲಾಗುತ್ತಿತ್ತು. ಈಗ ಅಪ್ಪನ ಪರವಾಗಿ ಮಗ, ಮಾವನ ಪರವಾಗಿ ಸೊಸೆ ಕದನ ಕಣದಲ್ಲಿದ್ದಾರೆ. ಕಾಂಗ್ರೆಸ್ ಪರ ಪ್ರಚಾರ ಮಾಡುವವರು ಅನುಪಮಾ ಅವರಿಗಿಂತ ಹೆಚ್ಚಾಗಿ ಪುಟ್ಟಸ್ವಾಮಿಗೌಡರ ಹೆಸರು ಕೂಗಿ ಜೈಕಾರ ಹಾಕುತ್ತಿರುವುದು ಮತ್ತು ರೇವಣ್ಣ ಮಾತೆತ್ತಿದರೆ `ದೊಡ್ಡಗೌಡರ' ನಾಮಸ್ಮರಣೆ ಮಾಡುವುದು ಇದೇ ಕಾರಣಕ್ಕಾಗಿ.
ಪುಟ್ಟಸ್ವಾಮಿಗೌಡರ ಸಾವಿನ ನಂತರ ಗೌಡರ ಕಾಳಗದಲ್ಲಿ ದೇವೇಗೌಡ ಕುಟುಂಬ ಕೈ ಮೇಲಾಗಿರುವುದು ಸ್ಪಷ್ಟ. ಮಾವನನ್ನು ಮಾತ್ರವಲ್ಲ ಗಂಡನನ್ನೂ ಕಳೆದುಕೊಂಡ ಅನುಪಮಾ ಅವರ ಪರವಾಗಿ ಅನುಕಂಪದ ಅಲೆಯ ಜತೆಗೆ ಪುಟ್ಟಸ್ವಾಮಿಗೌಡರ ಕಟ್ಟಾ ಬೆಂಬಲಿಗರ ಪಡೆ ಇರುವುದು ನಿಜ. ಆದರೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಕಾಣಿಸುತ್ತಿಲ್ಲ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಂಡಸಿ ಶಿವರಾಂ ಅವರು ಅನುಪಮಾ ರಾಜಕೀಯ ಪ್ರವೇಶವನ್ನು ಸ್ವಾಗತಿಸಿದವರಲ್ಲ. ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಆಗಿರುವ ನಿರಾಶೆ ಅವರ ಗೈರುಹಾಜರಿಯಲ್ಲಿ ಕಾಣುತ್ತಿದೆ. ಇಷ್ಟೆಲ್ಲ ಪ್ರತಿಕೂಲ ಅಂಶಗಳ ನಡುವೆಯೂ ಅನುಪಮಾ ಮಾವನ ಸಾವಿನ ನಂತರದ ದಿನಗಳಲ್ಲಿ ಗೌಡರ ಕುಟುಂಬದ ವಿರುದ್ಧದ ಹೋರಾಟವನ್ನು ಮುಂದುವರಿಸಿದ್ದಾರೆ.
`ರೇವಣ್ಣ ಬೆಂಬಲಿಗರು ಕಟ್ಟಾ ನಿಷ್ಠಾವಂತರು ಎನ್ನುವ ಹಾಗಿಲ್ಲ, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ರೇವಣ್ಣ ಅವರ ಮಾತು ಸರ್ಕಾರದಲ್ಲಿ ಬೆಲೆ ಇರುವುದು ಗೊತ್ತಾಗಿರುವ ಕಾರಣಕ್ಕೆ ಈ ಬೆಂಬಲಿಗರು ಸುತ್ತುವರಿದಿರಬಹುದು. ಆದರೆ ಅನುಪಮಾ ಬೆಂಬಲಿಗರು ರೇವಣ್ಣ ಒಡ್ಡುತ್ತಲೇ ಇರುವ ಎಲ್ಲ ಬಗೆಯ ಆಸೆ-ಆಮಿಷಗಳನ್ನು ಮೆಟ್ಟಿನಿಂತು ಜತೆಯಲ್ಲಿರುವವರು' ಎಂದು ಹೇಳುತ್ತಾರೆ ತನ್ನನ್ನು ಪಕ್ಷಾತೀತ ಎಂದು ಹೇಳಿಕೊಂಡ ಅಗ್ರಹಾರ-ಚೋಳೇನಹಳ್ಳಿಯ ಶಿವರಾಮೇಗೌಡರು.
ರೇವಣ್ಣ ಅವರಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಇರುವ ಯಾವ ಚಿಂತೆಯೂ ಇಲ್ಲ. `ತಂದೆ-ಮಕ್ಕಳ ಪಕ್ಷ' ಎಂದೇ ವಿರೋಧಿಗಳು ಗೇಲಿ ಮಾಡುವ ಜೆಡಿ (ಎಸ್)ನಲ್ಲಿ ಕನಿಷ್ಠ ಕ್ಷೇತ್ರದ ಮಟ್ಟಿಗೆ ಅವರದ್ದೇ ಕೊನೆಮಾತು.
ದೇವೇಗೌಡರು ಹಾಸನ ಲೋಕಸಭಾ ಸದಸ್ಯರೂ ಆಗಿರುವುದರಿಂದ ಅವರ ಪರವಾಗಿರುವ ಮತಗಳೂ ಕೂಡಾ ರೇವಣ್ಣ ಬುಟ್ಟಿಗೆ ಬಂದು ಬೀಳಬಹುದು. ಆದರೆ ಅಣ್ಣ ಕುಮಾರಸ್ವಾಮಿ ಅವರಂತೆ ರೇವಣ್ಣ ಅವರದ್ದು ಜನಪ್ರಿಯ ರಾಜಕಾರಣದ ಕಾರ್ಯಶೈಲಿ ಅಲ್ಲ. ಪಕ್ಷದ ಕಾರ್ಯಕರ್ತರು, ನಾಯಕರು ಯಾರೇ ಇರಲಿ ಯಾರೂ ರೇವಣ್ಣ ಮುಂದೆ ಕೂರುವ ಹಾಗಿಲ್ಲ, ಕೈಕಟ್ಟಿಕೊಂಡು ನಿಲ್ಲಲೇ ಬೇಕು. ಇದು ಕುಮಾರಸ್ವಾಮಿಯವ `ಬ್ರದರ್' ರಾಜಕೀಯದಿಂದ ಭಿನ್ನ.
ಮುಖಚಹರೆ, ದೇಹದ ಅಂಗಾಂಗಗಳ ಮೇಲೆ ಕೈಬೆರಳುಗಳ ಚಲನೆ, ಧ್ವನಿಯ ಏರಿಳಿತದಲ್ಲಿ ಮಾತ್ರವಲ್ಲ ಕಾರ್ಯಶೈಲಿಯಲ್ಲಿಯೂ ರೇವಣ್ಣ ಅವರಿಗೆ ಅಪ್ಪನ ಹೋಲಿಕೆ ಇದೆ. ಸರ್ಕಾರಿ ಕಡತಗಳನ್ನು ಓದಿ ಗ್ರಹಿಸುವ ದೇವೇಗೌಡರ ಸೂಕ್ಷ್ಮಬುದ್ದಿ ಓದಿದ್ದು ಕಡಿಮೆಯಾದರೂ ರೇವಣ್ಣ ಅವರಲ್ಲಿಯೂ ಇದೆ. ಇದರಿಂದಾಗಿಯೇ ಸಚಿವರಾಗಿದ್ದಾಗಲೂ ಅಧಿಕಾರಿಗಳ ಮೇಲೆ ಅವರಿಗೆ ನಿಯಂತ್ರಣ ಇತ್ತು. ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ದದ ಆರೋಪಗಳ ಅನೇಕ ಕಡತಗಳು ಪ್ರಧಾನ ವಿರೋಧಪಕ್ಷದ ನಾಯಕರಿಗೆ ಸಿಗದೆ ರೇವಣ್ಣ ಕೈಸೇರುತ್ತಿದ್ದದ್ದಕ್ಕೆ ಕೂಡಾ ಇದು ಕಾರಣ. ಇದನ್ನೇ ಕೈಯಲ್ಲಿಟ್ಟುಕೊಂಡು ರೇವಣ್ಣ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪವೂ ಇದೆ.
`ಅಜೀರ್ಣವಾಗುವಷ್ಟು ಅಭಿವೃದ್ಧಿ ಮಾಡಿದ್ದಾರೆ. ಇದನ್ನು ಕ್ಷೇತ್ರದ ಮತದಾರರ ಹಿತದೃಷ್ಟಿಗಿಂತಲೂ ಹೆಚ್ಚಾಗಿ ಬೆಂಬಲಿಗ ಗುತ್ತಿಗೆದಾರರಿಗೆ ನೆರವಾಗಲು ಮಾಡಿದ್ದಾರೆ' ಎನ್ನುವುದೇ ರೇವಣ್ಣ ಅವರ ಮೇಲಿನ ಪ್ರಮುಖ ಆರೋಪ.  ಸರಿಯಾಗಿರುವ ರಸ್ತೆಗಳೂ ದುರಸ್ತಿಯಾಗುತ್ತಿರುವುದು ಅಲ್ಲಲ್ಲಿ ಕಣ್ಣಿಗೆ ಬೀಳುತ್ತದೆ.
`ಅಭಿವೃದ್ಧಿಯ ಅಜೀರ್ಣತೆ' ಬಗ್ಗೆ ಆರೋಪಿಸುವವರು ಪಟ್ಟಣದ ಮಧ್ಯ ಹಾದುಹೋಗುವ ಹೇಮಾವತಿ ನದಿಗೆ 36 ಕೋಟಿ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿರುವುದನ್ನು ತೋರಿಸುತ್ತಾರೆ. `ಕಳೆದ 2-3 ದಶಕಗಳಲ್ಲಿ ಹೇಮಾವತಿ ನದಿಯಲ್ಲಿ ನೆರೆ ಬಂದಿಲ್ಲ. ಹೀಗಿದ್ದಾಗ ತಡೆಗೋಡೆ ಯಾಕೆ? ಆ ದುಡ್ಡನ್ನು ಹಳ್ಳಿಗಳಲ್ಲಿ ಬಡವರಿಗೆ ಮನೆ ಕಟ್ಟಿಸಿಕೊಡಬಹುದಿತ್ತಲ್ಲವೇ? ಎಂದು ಪ್ರಶ್ನಿಸುತ್ತಾರೆ ರೇವಣ್ಣ ಅವರ ಪ್ರತಿಸ್ಪರ್ಧಿ ಎಸ್.ಜಿ. ಅನುಪಮಾ. ಅಭಿವೃದ್ಧಿ ಕಾಮಗಾರಿಗಳಲ್ಲಿ ಕೂಡಾ ಪಕ್ಷ ರಾಜಕೀಯ ನಡೆದಿದೆ ಎಂದು ಅವರು ಆರೋಪಿಸುತ್ತಾರೆ. ವಿಚಿತ್ರವೆಂದರೆ ಅಭಿವೃದ್ಧಿ ಇಲ್ಲಿನ ಚುನಾವಣೆಯಲ್ಲಿ ಚರ್ಚೆಯಾಗುತ್ತಿರುವುದು ಅಭಿವೃದ್ಧಿ ಆಗಿಲ್ಲ ಎಂದಲ್ಲ, ಅಜೀರ್ಣವಾಗುವಷ್ಟು ಆಗಿದೆ ಎಂದು.
`ಸೋಲು-ಗೆಲುವಿನ ಬಗ್ಗೆ ಅಣ್ಣಾವ್ರ ತಲೆಕೆಡಿಸಿಕೊಂಡಿಲ್ಲ, `ಹೂ ಬಿದ್ದಾಗಿದೆ' ಅವರೇ ಗೆಲ್ಲುತ್ತಾರೆ' ಎನ್ನುತ್ತಾರೆ ಹೆಸರು ಬರೆಯಬೇಡಿ ಎಂದು ಕೇಳಿಕೊಂಡ ರೇವಣ್ಣ ಬೆಂಬಲಿಗರೊಬ್ಬರು. ದೇವೇಗೌಡರಂತೆ ರೇವಣ್ಣ ಅವರಿಗೂ ದೇವರು, ಜ್ಯೋಷಿಗಳ ಮೇಲೆ ಅಪಾರ ನಂಬಿಕೆ. ಗಳಿಗೆ-ಮುಹೂರ್ತ ನೋಡದೆ ಮನೆಯಿಂದ ಹೊರಗೆ ಕಾಲಿಡುವವರಲ್ಲ. ಅವರ ಎಲ್ಲ ಲೆಕ್ಕಾಚಾರಗಳೂ ಜ್ಯೋತಿಷಿಗಳ ಸಲಹೆ ಮೇಲೆ ನಡೆಯುವುದು. ರೇವಣ್ಣನವರು ಬೆವರು ಸುರಿಸುತ್ತಿರುವುದು ಜ್ಯೋತಿಷಿ ನುಡಿದಿರುವ ಭವಿಷ್ಯ ನಿಜಮಾಡುವುದಕ್ಕೋ, ಸುಳ್ಳುಮಾಡುವುದಕ್ಕೋ ಎಂಬುದನ್ನು ಅವರೇ ಹೇಳಬೇಕು, ಹೇಳುವುದಿಲ್ಲ.

Saturday, April 20, 2013

ಬೆಳಗಾವಿ ಜಿಲ್ಲೆಯ `ಸಿಂಡಿಕೇಟ್ ಪ್ರಜಾಪ್ರಭುತ್ವ'

ಗೋಕಾಕ (ಬೆಳಗಾವಿ ಜಿಲ್ಲೆ) : ಪಾಳೆಪಟ್ಟುಗಳು ಅಳಿದುಹೋಗಿ ಜನರ ಕೈಗೆ ಅಧಿಕಾರ ಬಂದಿದೆ ಎಂದು ಹೇಳುವವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ,ಗೋಕಾಕ, ಅರಬಾವಿ, ಯಮಕನಮರಡಿ ಕಡೆ ಹೋಗಿ ಇಣುಕಿ ಬರಬೇಕು. `ಪ್ರಜೆಗಳು,
ಪ್ರಜೆಗಳಿಗಾಗಿ, ಪ್ರಜೆಗಳಿಂದ... ಎನ್ನುವ ಪ್ರಜಾಪ್ರಭುತ್ವ ತತ್ವಾಧಾರಿತ ವ್ಯಾಖ್ಯಾನಕ್ಕೆ ಇಲ್ಲಿನ ರಾಜಕೀಯದಲ್ಲಿ ಕವಡೆಕಾಸಿನ ಕಿಮ್ಮತ್ತಿಲ್ಲ. ಇಲ್ಲಿರುವ `ಪ್ರಜಾಪ್ರಭುತ್ವದ ಪಾಳೆಯಗಾರರು' ನಡೆಸುತ್ತಾ ಬಂದಿರುವ ರಾಜಕಾರಣವನ್ನು ಸಾಂಪ್ರದಾಯಿಕ ರೀತಿಯಲ್ಲಿ ವ್ಯಾಖ್ಯಾನಿಸುವುದು ಕಷ್ಟ. ಇಲ್ಲಿರುವುದು `ಸಂಸದೀಯ ಪ್ರಜಾಪ್ರಭುತ್ವ' ಅಲ್ಲವೇ ಅಲ್ಲ, ಇದೊಂದು ರೀತಿಯ `ಸಿಂಡಿಕೇಟ್ ಪ್ರಜಾಪ್ರಭುತ್ವ'.
ಗೋಕಾಕದ ಜಾರಕಿಹೊಳಿ ಸೋದರರು ಮತ್ತು ಹುಕ್ಕೇರಿಯ ಕತ್ತಿ ಸೋದರರು ಕಳೆದ ಕೆಲವು ವರ್ಷಗಳಿಂದ ಸುಭದ್ರವಾದ ಪ್ರತ್ಯೇಕ ರಾಜಕೀಯ ಸಾಮ್ರಾಜ್ಯಗಳನ್ನು ಕಟ್ಟಿಕೊಂಡು ನೆಮ್ಮದಿಯಾಗಿದ್ದಾರೆ. ಇವರ ಸಾಲಿನಲ್ಲಿಯೇ ಇರುವ ಪ್ರಭಾಕರ ಕೋರೆ, ಪ್ರಕಾಶ್ ಹುಕ್ಕೇರಿ ಮೊದಲಾದವರ ರಾಜಕೀಯ ಜೀವನ ಕೂಡಾ ಅಷ್ಟೇ ಸುರಕ್ಷಿತವಾಗಿದೆ . ಒಂದು ಕಾಲದಲ್ಲಿ `ಬೆಳಗಾವಿ ಹುಲಿ' ಎಂಬ ಖ್ಯಾತಿ ಪಡೆದಿದ್ದ ವಿ.ಎಲ್.ಪಾಟೀಲ್ ಅವರೂ ನಡೆಸಿದ್ದು ಇದೇ ಮಾದರಿ ರಾಜಕೀಯ. ತಮ್ಮ ಉದ್ಯಮ ಮತ್ತು ರಾಜಕೀಯ ಸಾಮ್ರಾಜ್ಯದ ರಕ್ಷಣೆಗಾಗಿ ಕಟ್ಟಿಕೊಂಡಿರುವ `ರಾಜಕೀಯ ಸಿಂಡಿಕೇಟ್' ಇವರೆಲ್ಲರ ಯಶಸ್ಸಿನ ಗುಟ್ಟು `ಜಾತ್ಯತೀತ ಮತ್ತು ಪಕ್ಷಾತೀತವಾದ ಈ `ಸಿಂಡಿಕೇಟ್' ಯಾವ  ದಾಖಲೆಯಲ್ಲಿಯೂ ಇಲ್ಲ, ಕಣ್ಣಿಗೂ ಕಾಣುವುದಿಲ್ಲ. ಆದರೆ  ಗ್ರಾಮಪಂಚಾಯತ್‌ನಿಂದ ಲೋಕಸಭೆಯ ವರೆಗೆ, ಸಹಕಾರಿ ಬ್ಯಾಂಕ್‌ನಿಂದ ಹಾಲಿನ ಸೊಸೈಟಿ ವರೆಗೆ ನಡೆಯುವ ಎಲ್ಲ ಚುನಾವಣೆಗಳ ಫಲಿತಾಂಶದಲ್ಲಿ ಈ `ಸಿಂಡಿಕೇಟ್'ನ ನೆರಳನ್ನು ಕಾಣಬಹುದು.
ಈಗಿನ ವಿಧಾನಸಭೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸೋದರರು ಸದಸ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಯಮಕನಮರಡಿಯಿಂದ ಮತ್ತು ರಮೇಶ್ ಜಾರಕಿಹೊಳಿ ಗೋಕಾಕ ಕ್ಷೇತ್ರಗಳಿಂದ ಕಾಂಗ್ರೆಸ್ ಹುರಿಯಾಳುಗಳಾಗಿ ಆರಿಸಿ ಬಂದಿದ್ದರು. ಬಾಲಚಂದ್ರ ಜಾರಕಿಹೊಳಿ ಜಾತ್ಯತೀತ ಜನತಾದಳದಿಂದ ಅರಬಾವಿಯಿಂದ ಗೆದ್ದು ನಂತರ ಆಪರೇಷನ್‌ಕಮಲದಲ್ಲಿ ಬಿಜೆಪಿ ಸೇರಿದ್ದಾರೆ. ಈ ಕ್ಷೇತ್ರದ ಪಕ್ಕದಲ್ಲಿಯೇ ಇರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಸದಸ್ಯ ಉಮೇಶ್ ಕತ್ತಿ, ಅವರ ಸೋದರ ರಮೇಶ್ ಕತ್ತಿ ಲೋಕಸಭಾ ಸದಸ್ಯ. ಈ ರೀತಿ ಒಂದೇ ಜಿಲ್ಲೆಯ ಅಕ್ಕಪಕ್ಕದ ಮೂರು ಕ್ಷೇತ್ರಗಳಲ್ಲಿ ಮೂವರು ಸೋದರರು ಶಾಸಕರಾಗಿರುವ ಹಾಗೂ ಪಕ್ಕದ ಕ್ಷೇತ್ರಗಳಲ್ಲಿ ಅಣ್ಣತಮ್ಮಂದಿರು ಶಾಸಕ ಮತ್ತು ಸಂಸದರಾಗಿರುವ ಉದಾಹರಣೆ ದೇಶದಲ್ಲೆಲ್ಲೂ ಇಲ್ಲ.
ಇವರಲ್ಲಿ ಯಾರಿಗೂ ಈಗಿನ ಚುನಾವಣೆಯಲ್ಲಿ ಗೆಲುವಿನ ಬಗ್ಗೆಯೂ ಹೆಚ್ಚಿನ ಚಿಂತೆ ಇಲ್ಲ. ಮತದಾರರ ಅಂತರಂಗದಲ್ಲಿ ಏನೇ ಅಭಿಪ್ರಾಯ ಇದ್ದರೂ ಮತಯಂತ್ರದ ಮೇಲೆ ಕೈಯಾಡಿಸಿದಾಗ ಬೆರಳುಗಳು ತಮ್ಮನ್ನೇ ಆಯ್ಕೆ ಮಾಡುತ್ತವೆ ಎಂಬ ನಂಬಿಕೆ ಇವರಲ್ಲಿದೆ. ಹಿಂದಿನ ಚುನಾವಣೆಗಳ ಫಲಿತಾಂಶದ ಮೇಲೆ ಕಣ್ಣಾಡಿಸಿದರೆ ಈ ನಾಯಕರ ನಂಬಿಕೆ ಹುಸಿಯಾಗಬಹುದು ಎಂದು ಅನಿಸುವುದಿಲ್ಲ. ಉಮೇಶ್ ಕತ್ತಿ ಕಳೆದ ಐದು ಚುನಾವಣೆಗಳನ್ನು ಐದು ಪಕ್ಷಗಳಿಂದ ಗೆದ್ದಿದ್ದಾರೆ. ಆಪರೇಷನ್ ಕಮಲದಲ್ಲಿ ಭಾಗಿಯಾಗಿ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಾಲಚಂದ್ರ ಜಾರಕಿಹೊಳಿ ಉಪಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಮರುಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿದ್ದ ಸತೀಶ್ ಜಾರಕಿಹೊಳಿ ಕ್ಷೇತ್ರವಿಂಗಡಣೆಯ ನಂತರ ಯಮಕನಮರಡಿ ಎಂಬ ಹೊಸ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.
ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೂಡಾ ಬೆಳಗಾವಿ ಜಿಲ್ಲೆಯ `ಸಿಂಡಿಕೇಟ್' ರಾಜಕೀಯದ ಒಳನೋಟವನ್ನು ನೀಡುತ್ತದೆ. ಈ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 361 ಕ್ಷೇತ್ರಗಳ ಪೈಕಿ 196 ಪಕ್ಷೇತರರ ಪಾಲಾಗಿವೆ. ಗೋಕಾಕ ನಗರಸಭೆಯ 31ಕ್ಕೆ 31 ಸ್ಥಾನಗಳಲ್ಲಿ, ಚಿಕ್ಕೋಡಿ ಪುರಸಭೆಯ 23ಕ್ಕೆ 23ರಲ್ಲಿ, ಖಾನಾಪುರ ಪಟ್ಟಣ ಪಂಚಾಯತ್‌ನ 16ಕ್ಕೆ 16ರಲ್ಲಿ, ಚಿಕ್ಕೊಡಿ ಸದಲಗಾ ಪಟ್ಟಣ ಪಂಚಾಯತ್‌ನ 20ಕ್ಕೆ 20ರಲ್ಲಿ, ಗೋಕಾಕದ ಕೊಣ್ಣೂರು ಪಟ್ಟಣಪಂಚಾಯತ್‌ನ 17ಕ್ಕೆ 15ರಲ್ಲಿ ಪಕ್ಷೇತರರು ಆರಿಸಿ ಬಂದಿದ್ದಾರೆ. ಅಲ್ಲೆಲ್ಲ ಬೇರೆಬೇರೆ ಪಕ್ಷಗಳಿಗೆ ಸೇರಿರುವ ಶಾಸಕರಿದ್ದಾರೆ. ಆದರೆ ಅವರ ಪಕ್ಷದ ಸದಸ್ಯರೇ ಅಲ್ಲ, ಹೇಗೆ? ಮನಸ್ಸು ಮಾಡಿದರೆ ಈ ಶಾಸಕರು ತಮ್ಮ ಪಕ್ಷದ ಸದಸ್ಯರನ್ನೂ ಗೆಲ್ಲಿಸಬಲ್ಲರು ಎನ್ನುವುದಕ್ಕೆ ಹುಕ್ಕೇರಿ ಸಾಕ್ಷಿ.
ಇಲ್ಲಿನ ಶಾಸಕರಾದ ಉಮೇಶ್ ಕತ್ತಿಯವರು ಬಿಜೆಪಿಯೋ, ಕೆಜೆಪಿಯೋ ಎನ್ನುವ ಗೊಂದಲದಲ್ಲಿರುವಾಗಲೇ ಇಲ್ಲಿನ ಪಟ್ಟಣ ಪಂಚಾಯತ್‌ನ 19ರಲ್ಲಿ 18 ಸ್ಥಾನಗಳಲ್ಲಿ ಮತ್ತು ಇದೇ ಕ್ಷೇತ್ರಕ್ಕೆ ಸೇರಿದ ಸಂಕೇಶ್ವರ ಪುರಸಭೆಯ 23ಕ್ಕೆ 22ರಲ್ಲಿ ಬಿಜೆಪಿ ಗೆದ್ದಿದೆ. ತಮ್ಮ ಪಕ್ಷದ ಶಾಸಕರು ಇರುವ ಕಡೆಗಳಲ್ಲಿ ಪಕ್ಷದ ಸದಸ್ಯರು ಯಾಕೆ ಆರಿಸಿ ಬಂದಿಲ್ಲ ಎಂದು ಆ ಪಕ್ಷಗಳು ಕೇಳಬೇಕಲ್ಲವೇ? ಉದಾಹರಣೆಗೆ ಗೋಕಾಕ ನಗರಸಭೆ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿಯವರ ವ್ಯಾಪ್ತಿಯಲ್ಲಿ ಬರುತ್ತದೆ. ಅವರನ್ನು ಯಾರು ಕೇಳಿದ್ದಾರೆ? ಆರಿಸಿಬಂದಿರುವ ಪಕ್ಷೇತರರಲ್ಲಿ ಬಹುಸಂಖ್ಯಾತರು ಸ್ಥಳೀಯ ಶಾಸಕರ ಅನುಯಾಯಿಗಳು. ಉಳಿದವರನ್ನು ಶಾಸಕರು `ಮ್ಯಾನೇಜ್' ಮಾಡ್ತಾರೆ. ಆಡಳಿತದ ಸೂತ್ರ ಮಾತ್ರ ಶಾಸಕರ ಕೈಯಲ್ಲಿರುತ್ತದೆ. ಇದು ಒಟ್ಟು ಕಾರ್ಯತಂತ್ರ.
ಇಷ್ಟೊಂದು ಲೀಲಾಜಾಲವಾಗಿ ಚುನಾವಣೆಯಲ್ಲಿ ಗೆಲ್ಲಲು `ಸಿಂಡಿಕೇಟ್ ರಾಜಕಾರಣ' ಒಂದೇ ಅಲ್ಲದೆ ಬೇರೆ ಕಾರಣಗಳೂ ಇವೆ. ಜಾರಕಿಹೊಳಿ, ಕತ್ತಿ,ಕೋರೆ ಮೊದಲಾದವರ ಮೊದಲ ಆಸಕ್ತಿ ರಾಜಕೀಯ ಅಲ್ಲ ಉದ್ಯಮ. ಉಮೇಶ್ ಕತ್ತಿಯವರು ಖಾಸಗಿ ಸಕ್ಕರೆ ಕಾರ್ಖಾನೆಯ ಮಾಲೀಕರು ಮಾತ್ರವಲ್ಲ, ಸಹಕಾರಿ ಸಕ್ಕರೆ ಕಾರ್ಖಾನೆಯೊಂದು ಕೂಡಾ ಅವರ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿ ಇಲ್ಲಿ ಮಾತ್ರ ಇರುವ ಸಹಕಾರಿ ವಿದ್ಯುತ್ ವಿತರಣಾ ಸಂಘದ ಜತೆ ಹುಕ್ಕೇರಿ ಕ್ಷೇತ್ರದಲ್ಲಿರುವ ಸಹಕಾರಿ ರಂಗದ ಎಲ್ಲ ಸಂಸ್ಥೆಗಳು ಪ್ರತ್ಯಕ್ಷವಾಗಿ ಇಲ್ಲವೆ ಪರೋಕ್ಷವಾಗಿ ಕತ್ತಿ ಅವರ ಹಿಡಿತದಲ್ಲಿವೆ. ಇದರ ಜತೆಗೆ ಶಿಕ್ಷಣ ಸಂಸ್ಥೆಗಳಿವೆ. ಜಾರಕಿಹೊಳಿ ಕುಟುಂಬ ಒಂದು ಕಾಲದಲ್ಲಿ ಅಬಕಾರಿ ಉದ್ಯಮದಲ್ಲಿದ್ದವರು. ಸಾರಾಯಿ ನಿಷೇಧದ ನಂತರ ಸ್ವಲ್ಪ ಹಿನ್ನಡೆಯಾದರೂ ಸಂಪೂರ್ಣವಾಗಿ ಮದ್ಯದ ಉದ್ಯಮವನ್ನು ಬಿಟ್ಟಿಲ್ಲ. ಸತೀಶ್ ಮತ್ತು ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಕ್ಕರೆ ಕಾರ್ಖಾನೆಗಳಿವೆ. ಇದರ ಜತೆಗೆ ಬೆಂಗಳೂರಿನಿಂದ ಬೆಳಗಾವಿ ವರೆಗೆ ಬೇರೆಬೇರೆ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿದ್ದಾರೆ. ರಾಜಕೀಯಕ್ಕೆ ಬೇಕಾದ ದುಡ್ಡಿನ ಅವಶ್ಯಕತೆ ಪೂರೈಸಲು ಗುತ್ತಿಗೆದಾರರು ಇದ್ದೇ ಇರುತ್ತಾರೆ.
ಹಾಗಿದ್ದರೆ ದುಡ್ಡೊಂದೇ ಇವರ ರಾಜಕೀಯ ಯಶಸ್ಸಿಗೆ ಕಾರಣವೇ? ಇವರಿಗಿಂತ ನೂರಾರು ಪಟ್ಟು ಶ್ರಿಮಂತರು ರಾಜ್ಯದಲ್ಲಿದ್ದಾರೆ, ವಿಧಾನಸಭೆಯ ಒಂದು ಟಿಕೆಟ್‌ಗಾಗಿ ಕೋಟಿ-ಕೋಟಿ ರೂಪಾಯಿ ಚೆಲ್ಲುವವರಿದ್ದಾರೆ.  ಅವರಿಗೆ ಯಾಕೆ ರಾಜಕೀಯ ಯಶಸ್ಸು ಸಿಗಲಿಲ್ಲ ಎನ್ನುವ ಪ್ರಶ್ನೆಯೂ ಇದೆ. ಕಾರಣಗಳು ಬೇರೆ ಇವೆ. ಮಹಾರಾಷ್ಟ್ರದ ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಲಾಬಿಯ ಸೋಂಕು ಆ ರಾಜ್ಯದ ಗಡಿಭಾಗದಲ್ಲಿರುವ ಬೆಳಗಾವಿಗೂ ತಗಲಿದೆ. ದೇಶದಲ್ಲಿ ಈ ರೀತಿಯ `ಸಿಂಡಿಕೇಟ್ ರಾಜಕಾರಣ'ಕ್ಕೆ ಖ್ಯಾತಿಯೋ, ಕುಖ್ಯಾತಿಯೋ ಪಡೆದವರು ಶರದ್ ಪವಾರ್. ಇಲ್ಲಿನ ರಾಜಕೀಯ ಬಹುಪಾಲು ಅವರ ತಂತ್ರವನ್ನು ಹೋಲುತ್ತದೆ.
ಇವರಲ್ಲಿ ಯಾರಿಗೂ ತಾವಿದ್ದ ಪಕ್ಷದ ಮೇಲೆ ಕಟ್ಟಾ ನಿಷ್ಠೆ ಇಲ್ಲ. ಇವರ ರಾಜಕೀಯ ಜೀವನದ ಪಕ್ಷಾಂತರಗಳ ಇತಿಹಾಸವೇ ಇದಕ್ಕೆ ಸಾಕ್ಷಿ.   ರಾಜಕೀಯ ಎದುರಾಳಿಗಳು ತಲೆಎತ್ತದಂತೆ ನಿರ್ನಾಮ ಮಾಡಿಬಿಡುವುದು, ಜನತೆಯ ಪಾಲುದಾರಿಕೆ ಇರುವ ಎಲ್ಲ ಸಂಸ್ಥೆಗಳ ಮೇಲೆ ನಿಯಂತ್ರಣ, ಪಕ್ಷಾತೀತವಾಗಿ ರಾಜಕೀಯ ನಾಯಕರ ಜತೆ ಸೌಹಾರ್ದಯುತ ಹೊಂದಾಣಿಕೆ ಮತ್ತು ಮತದಾರರ ತಲೆ ಮೇಲೆ ವೈಯಕ್ತಿಕ ಋಣಭಾರದ ಹೇರಿಕೆ- ಇದು ಇವರ ರಾಜಕೀಯ ಕಾರ್ಯಚರಣೆಯ ಮೋಡಸ್ ಅಪರೆಂಡಿ. ಚುನಾವಣೆಯಲ್ಲಿ ಎದುರಾಳಿ ಅಭ್ಯರ್ಥಿ ದುರ್ಬಲ ವಾಗಿರುವಂತೆ ತಮ್ಮೆಲ್ಲ ಸಂಪರ್ಕ -ಸಾಮರ್ಥ್ಯವನ್ನು ಬಳಸಿಕೊಂಡು ಇವರು ಪರಸ್ಪರ ನೆರವಾಗುತ್ತಾರೆ. ಉದಾಹರಣೆಗೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ಉಮೇಶ್ ಕತ್ತಿ ಜನತಾದಳ ಇಲ್ಲವೆ ಬಿಜೆಪಿಯಿಂದ ಸ್ಪರ್ಧಿಸಿದಾಗ `ಸಿಂಡಿಕೇಟ್'ನಲ್ಲಿರುವ ಕಾಂಗ್ರೆಸ್ ಸದಸ್ಯರು ಅವರ ಎದುರು ದುರ್ಬಲ ಅಭ್ಯರ್ಥಿ ಕಣಕ್ಕಿಳಿಸುವಂತೆ ನೋಡಿಕೊಳ್ಳುತ್ತಾರೆ.
ಅರಬಾವಿಯಿಂದ ಬಾಲಚಂದ್ರ ಜಾರಕಿಹೊಳಿ ಜೆಡಿ(ಎಸ್)ನಿಂದ ಸ್ಪರ್ಧಿಸಿದಾಗ ಅವರ ಎದುರಾಳಿಯಾಗಿದ್ದದ್ದು ಕಾಂಗ್ರೆಸ್‌ನ ದುರ್ಬಲ ಅಭ್ಯರ್ಥಿ. ಪಕ್ಷ ಯಾವುದೇ ಇರಲಿ ಇಡೀ ಜಾರಕಿಹೊಳಿ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರ ಮೇಲೆ ಇರುವ ನಿಷ್ಠೆಯೂ ಇದಕ್ಕೆ ನೆರವಾಗಿದೆ ಎಂಬ ಆರೋಪ ಇದೆ. ಹುಕ್ಕೇರಿ ಕ್ಷೇತ್ರದಿಂದ ಸತತವಾಗಿ ಆರಿಸಿ ಬರುತ್ತಿರುವ ಉಮೇಶ್ ಕತ್ತಿ ಎದುರು ವಿರೋಧ ಪಕ್ಷಗಳು ಬಲಿಷ್ಠ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇ ಅಪರೂಪ. ಇದ್ದ ಒಬ್ಬ ವಿರೋಧಿ ಎ.ಬಿ.ಪಾಟೀಲ್ ಕ್ಷೇತ್ರ ವಿಂಗಡಣೆಯ ನಂತರ ಅನಾಥರಾಗಿದ್ದಾರೆ. ಅಂತರಂಗದಲ್ಲಿ ದ್ವೇಷಾಸೂಯೆಗಳಿದ್ದರೂ ಸಾಮಾನ್ಯವಾಗಿ `ಸಿಂಡಿಕೇಟ್' ಸದಸ್ಯರು ಒಬ್ಬರು ಮತ್ತೊಬ್ಬರ ಕಾರ್ಯಕ್ಷೇತ್ರಕ್ಕೆ ಅಕ್ರಮವಾಗಿ ಪ್ರವೇಶ ಮಾಡುವುದಿಲ್ಲ.
ಇವರೆಲ್ಲರೂ ತಮ್ಮ ಜನಪ್ರಿಯತೆಯಿಂದಲೇ ಆರಿಸಿಬರುತ್ತಾರೆ ಎಂದು ಹೇಳಲಿಕ್ಕೂ ಆಗದು. ಜನರನ್ನು ಮಾತಿಗೆಳೆದರೆ ಇದು ಸ್ಪಷ್ಟವಾಗುತ್ತದೆ. `ಇವರನ್ನು ಸೋಲಿಸುವ ಅಭ್ಯರ್ಥಿಗಳು ಬೇಕಲ್ಲಾ? ಅಂತಹವರು ಬಂದರೆ ಜನಾನೂ ಬದಲಾವಣೆಗೆ ಸಿದ್ಧರಾಗಬಹುದು. ಉಳಿದವರನ್ನು ಬೆಳೆಯಲಿಕ್ಕೆ ಬಿಡುವುದೇ ಇಲ್ಲವಲ್ಲಾ?' ಎಂದ ಯರಗಟ್ಟಿಯಲ್ಲಿ ಸಿಕ್ಕ ರೈತ ಶಿವನಗೌಡ ಪಾಟೀಲರ ಅಭಿಪ್ರಾಯವೇ ಈ ಕ್ಷೇತ್ರಗಳ ಬಹಳ ಮಂದಿಯಲ್ಲಿದೆ. ಇವರೆಲ್ಲರ ಮಾತು ಕೇಳಿದರೆ ಈ ಅಸಹಾಯಕ ಜನ ತಮ್ಮನ್ನು ರಾಜಕೀಯ ಗುಲಾಮಗಿರಿಯಿಂದ ಪಾರು ಮಾಡಲು `ಕುದುರೆ ಏರಿ ಬರುವ ಸರದಾರ'ನಿಗಾಗಿ ಕಾಯುತ್ತಿರುವಂತೆ ಕಾಣುತ್ತಿದೆ. ಆ `ಸರದಾರ' ಸದ್ಯಕ್ಕೆ ಬರುವ ಹಾಗೆ ಕಾಣುವುದಿಲ್ಲ.

Friday, April 19, 2013

ಹರಿದು ಹಂಚಿಹೋಗಿರುವ `ರೈತ ಮತಬ್ಯಾಂಕ್'

ನರಗುಂದ: `ಇಂದಿನ ರಾಜಕೀಯ ಹಾದಿ ತಪ್ಪಲು ಅದನ್ನು ನಿಯಂತ್ರಿಸುವ ಸಾಮರ್ಥ್ಯದ ಚಳವಳಿಗಳು ಇಲ್ಲದಿರುವುದು
ಕಾರಣ' ಎಂದು ಹೇಳುವವರಿದ್ದಾರೆ. ಈ ರೀತಿ ಹೇಳುವವರೆಲ್ಲರೂ ಎಂಬತ್ತರ ದಶಕದ ರೈತ,ಭಾಷಾ ಮತ್ತು ದಲಿತ ಚಳವಳಿಗಳನ್ನು ನೆನಪುಮಾಡಿಕೊಳ್ಳುತ್ತಾರೆ. `ರಾಜಕೀಯದ  ಆಕರ್ಷಣೆಯಿಂದಾಗಿಯೇ ಚಳವಳಿಗಳು ಅಕಾಲ ಸಾವು ಎದುರಿಸುವಂತಾಯಿತು' ಎಂದು ದೂರುವವರೂ ಇದ್ದಾರೆ. ಈ ರೀತಿ ಹೇಳುವವರು ಎಂಬತ್ತರ ದಶಕದ ಉತ್ತರಾರ್ಧದ ಕಾಂಗ್ರೆಸೇತರ ರಾಜಕಾರಣವನ್ನು ಉಲ್ಲೇಖಿಸುತ್ತಾರೆ. ಈ ಎರಡೂ ಅಭಿಪ್ರಾಯಗಳಲ್ಲಿ ಇರುವ ಸತ್ಯಕ್ಕೆ ಸಾಕ್ಷಿಯಾಗಿರುವುದು ನರಗುಂದ.
ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸೇತರ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾದ ಬೆಳವಣಿಗೆಗಳ ಬೀಜ ಮೊಳಕೆಯೊಡೆದದ್ದು ನರಗುಂದದ ಕಪ್ಪುಮಣ್ಣಿನಲ್ಲಿ. ಮಲಪ್ರಭಾ ಅಚ್ಚುಕಟ್ಟು ಪ್ರದೇಶಕ್ಕೆ ಸೇರಿರುವ ನರಗುಂದ, ನವಲಗುಂದ ಮತ್ತು ಸವದತ್ತಿ ತಾಲ್ಲೂಕುಗಳ ರೈತರ ಬಂಡಾಯ ಬೆಳೆಯುತ್ತಾ ಬೇರೆಬೇರೆ ರೂಪಗಳಲ್ಲಿ ರಾಜ್ಯವ್ಯಾಪಿ ವಿಸ್ತರಣೆಗೊಂಡು ಕೊನೆಗೆ  ಚುನಾವಣಾ ಕಣದಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕಿತ್ತು. ರೈತ ಚಳವಳಿಯ ಮೂಲ ಉದ್ದೇಶ, ಅಭಿವೃದ್ಧಿ ಕರ ಮತ್ತು ನೀರಿನ ಶುಲ್ಕದ ರದ್ದತಿ ಹಾಗೂ ವೈಜ್ಞಾನಿಕ ಬೆಲೆ ನಿಗದಿಯಾಗಿತ್ತೇ ಹೊರತು ರಾಜಕೀಯ ಬದಲಾವಣೆ ಅಲ್ಲದೆ ಇದ್ದರೂ ಅದು ನಡೆದು ಹೋಯಿತು. ಆಗಲೇ ಚುನಾವಣೆಯ ಫಲಿತಾಂಶದ ಮೇಲೆ ರೈತ ಚಳವಳಿ ಉಂಟು ಮಾಡಿದ ಪರಿಣಾಮ ರಾಜಕೀಯ ಪಕ್ಷಗಳ ಗಮನಸೆಳೆದದ್ದು. ಇದರಿಂದಾಗಿ ಅಲ್ಲಿಯ ವರೆಗೆ ಅದೃಶ್ಯವಾಗಿದ್ದ `ರೈತ ಮತಬ್ಯಾಂಕ್' ಕಡೆ ರಾಜಕಾರಣಿಗಳು ಕಣ್ಣುಹರಿಸುವಂತಾಯಿತು.
ಮಲಪ್ರಭಾ ರೈತಹೋರಾಟ ಸಮನ್ವಯ ಸಮಿತಿಯ ಸಂಚಾಲಕರಾಗಿದ್ದ ಬಿ.ಆರ್.ಯಾವಗಲ್ ಕ್ರಾಂತಿರಂಗದ ಅಭ್ಯರ್ಥಿಯಾಗಿ 1983ರಲ್ಲಿ ನರಗುಂದ ಕ್ಷೇತ್ರದಿಂದ ಆಯ್ಕೆಯಾಗಿದ್ದು ರಾಜ್ಯ ರೈತಚಳವಳಿಯಲ್ಲಿನ ದೊಡ್ಡ ತಿರುವು. ವಿಚಿತ್ರವೆಂದರೆ ನರಗುಂದದ ಜತೆಯಲ್ಲಿಯೇ ತೀವ್ರಸ್ವರೂಪದ ರೈತ ಚಳವಳಿ ನಡೆದಿದ್ದ ನವಲಗುಂದ ಮತ್ತು ಸವದತ್ತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರು. ಇಷ್ಟು ಮಾತ್ರವಲ್ಲ ಈ ಮೂರೂ ಕ್ಷೇತ್ರಗಳಲ್ಲಿ ಗೆದ್ದವರು ಭೂಮಾಲೀಕರಾಗಿದ್ದರು. ಆ ಚುನಾವಣೆಯ  ನಂತರವಾದರೂ ರಾಜಕೀಯ ಮಧ್ಯಪ್ರವೇಶದ ಬಗ್ಗೆ ರೈತ ಚಳವಳಿಯ ನಾಯಕರು ಎಚ್ಚೆತ್ತುಕೊಳ್ಳಬೇಕಾಗಿತ್ತು. ಆದರೆ ಹಾಗಾಗಲಿಲ್ಲ. ಅದರ ನಂತರ ಕರ್ನಾಟಕ ರಾಜ್ಯ ರೈತ ಸಂಘವೇ ನೇರವಾಗಿ ಚುನಾವಣೆಯ ಅಖಾಡಕ್ಕಿಳಿಯಿತು. ಬಾಬಾಗೌಡ ಪಾಟೀಲರು ಕಿತ್ತೂರು ಮತ್ತು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯೂ ಆಗಿಬಿಟ್ಟರು.
ಕಳೆದ ಮೂರು ದಶಕಗಳಲ್ಲಿ ಮಲಪ್ರಭೆಯಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಒಂದು ಕಾಲದಲ್ಲಿ ರೈತ ಚಳವಳಿಯಲ್ಲಿದ್ದ ನಾಯಕರು ಕಾಂಗ್ರೆಸ್, ಬಿಜೆಪಿ, ಜೆಡಿ(ಎಸ್)ಗಳಲ್ಲಿ ಹಂಚಿಹೋಗಿದ್ದಾರೆ. ಇಪ್ಪತ್ತು ವರ್ಷಗಳ ಹಿಂದೆ ಯುವ ರೈತ ಮುಖಂಡರಾಗಿ ಕಾಂಗ್ರೆಸ್ ವಿರುದ್ಧವೇ ಸ್ಪರ್ಧಿಸಿದ್ದ ಬಿ.ಆರ್.ಯಾವಗಲ್ ಈಗ ನರಗುಂದದಲ್ಲಿ ಅದೇ ಪಕ್ಷದ ಅಭ್ಯರ್ಥಿ. ಅವರ ಎದುರಾಳಿ ಕಳಸಾ-ಬಂಡೂರಿ ಚಳವಳಿಯ ಕಾಲದಲ್ಲಿ ಓಡಾಡುತ್ತಿದ್ದ ಸಿ.ಸಿ. ಪಾಟೀಲ್. ಬಾಬಾಗೌಡ ಪಾಟೀಲ್ ಅವರು ಒಮ್ಮೆ ಬಿಜೆಪಿ ಸೇರಿ ಮತ್ತೆ ಹೊರಬಂದು ಈಗ ಬಿಜೆಪಿ ಸೇರಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣ ನೇರವಾಗಿ ಕೆಜೆಪಿ ಜತೆ ಮೈತ್ರಿ ಮಾಡಿಕೊಂಡು ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಇನ್ನೊಂದು ಬಣದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮತ್ತೊಂದು ರಂಗ ಕಟ್ಟಿಕೊಂಡು ಕೆಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.  ಈ ಎಲ್ಲ ಬೆಳವಣಿಗೆಗಳಿಂದಾಗಿ ಪ್ರಾಮಾಣಿಕವಾಗಿ ಸಂಘಟನೆಗೆಂದು ಹೊರಡುವ ನಾಯಕರನ್ನು ಹಳ್ಳಿಗಳಲ್ಲಿ ರೈತರೇ ನಂಬುತಿಲ್ಲ. ರಾಜಕೀಯ ಉದ್ದೇಶದಿಂದಲೇ ಇದನ್ನು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಾರೆ. ಈ ಕಾರಣಕ್ಕಾಗಿಯೇ ಹಾವೇರಿಯ ರೈತ ನಾಯಕ ಶಿವಾನಂದ ಗುರುಮಠ್ ಅವರು `ಕರ್ನಾಟಕ ರಾಜ್ಯ ರೈತ (ಚುನಾವಣೇತರ) ಸಂಘಟನೆ'ಯನ್ನು ಕಟ್ಟಿಕೊಂಡಿದ್ದಾರೆ. ಇರುವುದರಲ್ಲಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಹಳೆಯ ಚಳವಳಿಯ ನೆನಪಿನ ಚುಂಗು ಹಿಡಿದುಕೊಂಡು ಕೂತಿದೆ.
`1980ರ ಜುಲೈ 21ನೇ ದಿನ ನನಗಿನ್ನೂ ನೆನಪಿದೆ. ನರಗುಂದದಲ್ಲಿ ಎಂಟರಿಂದ ಹತ್ತು ಸಾವಿರದಷ್ಟು ರೈತರು ಸೇರಿದ್ದರು. ಕಚೇರಿ ಪ್ರವೇಶಿಸಲು ಬಿಡದ ತಹಶೀಲ್ದಾರ್ ಪೊಲೀಸರನ್ನು ಕರೆಸಿ ಲಾಠಿ ಪ್ರಹಾರ ಮಾಡಿಸಿದರು.ಕೊನೆಗೆ ಗೋಲಿಬಾರ್ ನಡೆಯಿತು. ಚಿಕ್ಕನರಗುಂದದ ಈರಪ್ಪ ಕಡ್ಲಿಕೊಪ್ಪ ಎಂಬ ಯುವರೈತ ಸ್ಥಳದಲ್ಲಿಯೇ ಮೃತಪಟ್ಟ. ಅದೇ ಹೊತ್ತಿನಲ್ಲಿ ನವಲಗುಂದದಲ್ಲಿ ನಡೆದ ಗೋಲಿಬಾರ್‌ಗೆ ಅಳಗವಾಡಿಯ ಬಸಪ್ಪ ಲಕ್ಕುಂಡಿ ಬಲಿಯಾದ. ಇದರಿಂದ ರೊಚ್ಚಿಗೆದ್ದ ರೈತರು ಮೂವರು ಪೊಲೀಸರನ್ನು ಸಾಯಿಸಿದರು. ಅದರ ನಂತರ ನರಗುಂದ-ನವಲಗುಂದಗಳಲ್ಲಿ ನಡೆದದ್ದು ಭೀಕರ ಪೊಲೀಸ್ ಅಟ್ಟಹಾಸ. ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರು, ಸಾವಿರಾರು ರೈತರು ಗಾಯಗೊಂಡರು-ಇವೆಲ್ಲ ವಿಧಾನಸೌಧದಲ್ಲಿ ಹೋಗಿ ಕೂರ‌್ಲಿಕ್ಕೇನು? ಅಲ್ಲಿ ಹೋದವರಾದರೂ ರೈತರ ಹಿತಾಸಕ್ತಿಯ ರಕ್ಷಣೆಯಾದರೂ ಮಾಡಿದರೇ? ಅದೂ ಇಲ್ಲ' ಎಂದು ಸಿಟ್ಟಿನಿಂದಲೇ ಪ್ರಶ್ನಿಸುತ್ತಾರೆ 1980ರ ನರಗುಂದ ರೈತ ಬಂಡಾಯದಲ್ಲಿ ಭಾಗವಹಿಸಿದ್ದ ರೈತ ಮುಖಂಡ ಎಸ್.ಎನ್.ಈರೇಶನವರ್.
ಕಳೆದ ಮೂರು ದಶಕಗಳಲ್ಲಿ ಮಲಪ್ರಭೆಯಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಒಂದು ಕಾಲದಲ್ಲಿ ವರಲಕ್ಷ್ಮಿ ಹತ್ತಿ ರೈತರ ಪಾಲಿನ ಲಕ್ಷ್ಮಿಯಾಗಿತ್ತು. ಈಗ ಶಾಪವಾಗಿದೆ. ಈಗ ರೈತರು ಹತ್ತಿಹಾಕುವುದನ್ನೇ ನಿಲ್ಲಿಸಿ ಮೆಕ್ಕೆಜೋಳ, ಸೂರ್ಯಕಾಂತಿ, ಜೋಳ, ಗೋಧಿಯ ಮೊರೆಹೋಗಿದ್ದಾರೆ. ಇತ್ತೀಚಿನ 2-3 ವರ್ಷಗಳಲ್ಲಿ ಬಿಟಿ ಹತ್ತಿಯ ಹುಚ್ಚು ಹತ್ತಿಕೊಂಡಿದೆ. ಭೂಮಿ ಕ್ಷಾರವಾಗುತ್ತಿದೆ. ಕೃಷಿಕೂಲಿಕಾರರ ಅಭಾವ, ಉತ್ಪಾದನಾ ವೆಚ್ಚದಲ್ಲಿ ಏರಿಕೆ, ಇಳುವರಿಯಲ್ಲಿ ಇಳಿಕೆಯಿಂದಾಗಿ ಕೃಷಿ ಯಾರಿಗೂ ಬೇಡದ ವೃತ್ತಿಯಾಗಿದೆ. ಇದರಿಂದಾಗಿ `ಗೈರುಹಾಜರಿ ಜಮೀನ್ದಾರಿಕೆ' ಹೆಚ್ಚಾಗುತ್ತಿದೆ. ರೈತರ ಬದುಕಿನಲ್ಲಿ ಸಮಸ್ಯೆ ಈಗಲೂ ಇದೆ. ಪ್ರಾರಂಭದಲ್ಲಿ ಮಲಪ್ರಭಾ ಜಲಾಶಯದಿಂದ ವರ್ಷಕ್ಕೆ ಐದು ತಿಂಗಳು ನೀರು ಬಿಡ್ತಾ ಇದ್ದರು. ಈಗ 30 ದಿನ ಬಿಟ್ಟರೆ ಹೆಚ್ಚು. ಅಲ್ಲಿಯೂ ನೀರಿಲ್ಲ. ಜಲಾಶಯದಲ್ಲಿ ಹೂಳು ತುಂಬಿದೆ, ಕಾಲುವೆಗಳು ದುರಸ್ತಿಯಾಗಿಲ್ಲ. ಮಳೆ ಕಡಿಮೆಯಾಗುತ್ತಿದೆ. 300-400 ಅಡಿಯಷ್ಟು ಕೊಳವೆ ಬಾಗಿ ಕೊರೆದರೂ ನೀರಿಲ್ಲ. ಇದು ಯಾವುದೂ ಇಲ್ಲಿ ಈ ಬಾರಿಯ ಚುನಾವಣಾ ವಿಷಯ ಅಲ್ಲ. ಹಳ್ಳಿ ಕಟ್ಟೆಯಲ್ಲಿ ಕೂತ ರೈತರು ಬಿಜೆಪಿ-ಕೆಜೆಪಿ ಬಲಾಬಲದ ಚರ್ಚೆಯಲ್ಲಿ ತೊಡಗಿದ್ದರು. ಗೋಲಿಬಾರ್‌ನಲ್ಲಿ ಸಾವಿಗೀಡಾದ ಬಸಪ್ಪ ಲಕ್ಕುಂಡಿ ಮತ್ತು ಈರಪ್ಪ ಕಡ್ಲಿಕೊಪ್ಪನವರಿಗೆ ನಿರ್ಮಿಸಲಾಗಿರುವ ಹುತಾತ್ಮ ಸ್ಮಾರಕಗಳು ಇಂತಹ ಚರ್ಚೆಗಳಿಗೆ ಮೂಕಸಾಕ್ಷಿಯಾಗಿವೆ.
ಮಲಪ್ರಭೆಗೆ ಕಳಸಾ-ಬಂಡೂರಿ ಹಳ್ಳಗಳನ್ನು ಜೋಡಿಸುವ ಮಹದಾಯಿ ಯೋಜನೆಗಾಗಿ ನಡೆದ ಚಳವಳಿ ಮತ್ತೊಮ್ಮೆ ಈ ಭಾಗದ ರೈತರಲ್ಲಿ ಹುರುಪು ತುಂಬಿತ್ತು.  ಇದಕ್ಕಾಗಿಯೇ ರಚನೆಗೊಂಡ ಯುವ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷರಾಗಿದ್ದ ಬಿ.ವಿ.ಸೋಮಾಪುರ 2004ರಲ್ಲಿ ಜೆಡಿ (ಎಸ್)ಟಿಕೆಟ್‌ನಲ್ಲಿ ಸ್ಪರ್ಧಿಸಿ 1300 ಮತಪಡೆದು ಸೋತುಹೋದರು. ಅದರ ನಂತರ ಯುವರೈತ ಮುಖಂಡ ವಿಜಯ ಕುಲಕರ್ಣಿ ಚಳವಳಿಯನ್ನು ಮುನ್ನಡೆಸುತ್ತಾ ಬಂದಿದ್ದಾರೆ. `ನರಗುಂದದ ಮಣ್ಣಿನಲ್ಲಿಯೇ ಹೋರಾಟದ ಕೆಚ್ಚು ಇದ್ದರೂ ರಾಜಕೀಯದ ಕೈಗೆ ಸಿಕ್ಕಿ ದಾರಿತಪ್ಪುತ್ತಿದೆ' ಎನ್ನುವುದು ಕುಲಕರ್ಣಿಯವರ ವಿಷಾದದ ಮಾತು. ರಾಜ್ಯಜಲ ಸಂಪನ್ಮೂಲ ಸಚಿವರಾಗಿರುವ ಬಸವರಾಜ ಬೊಮ್ಮಾಯಿ  ಚಳವಳಿಯನ್ನು ಬಿಜೆಪಿ ಕಡೆ ಎಳೆದೊಯ್ಯುವ ಪ್ರಯತ್ನವನ್ನು ಮಾಡಿದ್ದರೂ ಅವರು ತೋರಿದ ಆಸಕ್ತಿಯಿಂದಾಗಿ ಒಂದಷ್ಟು ಕಾಮಗಾರಿ ನಡೆದಿದೆ. ಸದ್ಯಕ್ಕೆ ಕೇಂದ್ರ ಸರ್ಕಾರ ವಿವಾದದ ಇತ್ಯರ್ಥಕ್ಕೆ ನ್ಯಾಯಮಂಡಳಿಯನ್ನು ರಚಿಸಿರುವ ಕಾರಣ ಚಳವಳಿ ಕಾವು ಕಳೆದುಕೊಂಡಿದೆ.
`ಸಾಲಮನ್ನಾ, ಪುಕ್ಕಟೆ ವಿದ್ಯುತ್, ನೀರಿನ ಕರ ರದ್ದತಿ ಮೊದಲಾದ ಬೇಡಿಕೆಗಳು ಈಗ ಪ್ರಸ್ತುತತೆಯನ್ನು ಕಳೆದುಕೊಂಡಿದೆ. ಉದಾರ ಆರ್ಥಿಕ ನೀತಿಯ ಫಲವಾದ ಭೂಸುಧಾರಣೆ, ಎಪಿಎಂಸಿ, ಭೂಸ್ವಾಧೀನ, ಬೀಜ ಮತ್ತು ಪೇಟೆಂಟ್ ಕಾನೂನುಗಳಿಗೆ ಆಗಿರುವ ತಿದ್ದುಪಡಿಗಳು ರೈತನ ಬದುಕಲ್ಲಿ ಹೊಸ ಸಮಸ್ಯೆಗಳನ್ನು ಹುಟ್ಟುಹಾಕಿವೆ' ಎನ್ನುತ್ತಾರೆ ನರಗುಂದ ರೈತ ಬಂಡಾಯದ ರೂವಾರಿಗಳಲ್ಲೊಬ್ಬರಾದ ಬಿ.ಎಸ್.ಸೊಪ್ಪಿನ್. ಇತ್ತೀಚೆಗೆ ಈ ಚಳವಳಿಯ ಇತಿಹಾಸವನ್ನು ದಾಖಲಿಸುವ ಪುಸ್ತಕವೊಂದನ್ನೂ ಇವರು ಬರೆದಿದ್ದಾರೆ. `ಬದಲಾಗುತ್ತಿರುವ ಕಾಲದ ಅವಶ್ಯಕತೆಗಳಿಗೆ ತಕ್ಕಂತೆ ಚಳವಳಿಯನ್ನು ಪುನರ್‌ರೂಪಿಸಲು ಸಾಧ್ಯವಾದರೆ  ಈಗಲೂ ರೈತ ಮತಬ್ಯಾಂಕ್ ರಾಜಕೀಯ ಶಕ್ತಿಯಾಗಿ ಬೆಳೆಯಲು ಸಾಧ್ಯ' ಎನ್ನುವ ವಿಶ್ವಾಸ ಸೊಪ್ಪಿನ್ ಅವರದ್ದು. ಆದರೆ ವಿಧಾನಸೌಧ ಪ್ರವೇಶಿಸುವ ಧಾವಂತದಲ್ಲಿರುವ ರೈತ ನಾಯಕರಿಗೆ ಚಳವಳಿಯನ್ನು ಕಟ್ಟಲು ಬೇಕಾದ ತಾಳ್ಮೆ ಮತ್ತು ವಿಶ್ವಾಸ ಇದ್ದ ಹಾಗಿಲ್ಲ.

Thursday, April 18, 2013

ಸುಂಟರಗಾಳಿಯೊಂದು ಬೀಸಿ ಹೋದ ಮೇಲೆ...

ಗದಗ: ಸುಂಟರಗಾಳಿಯೊಂದು ಬೀಸಿಹೋದ ನಂತರದ ಸ್ಥಿತಿ ಗದಗ ಜಿಲ್ಲೆಯಲ್ಲಿದೆ. `ಹುಲಕೋಟಿಯ ಹುಲಿ' ಮತ್ತು ಅದರ `ಮರಿ'ಗಳು ಸುಮಾರು ಮೂರು-ನಾಲ್ಕು ದಶಕಗಳಿಂದ ಕಷ್ಟಪಟ್ಟು ಕಟ್ಟಿಕೊಂಡಿದ್ದ ರಾಜಕೀಯ ಸಾಮ್ರಾಜ್ಯವನ್ನು ಬಳ್ಳಾರಿ
ಕಡೆಯಿಂದ ಬಂದ ಶ್ರಿರಾಮುಲು ಎಂಬ ಸುಂಟರಗಾಳಿ ಕಳೆದ ಚುನಾವಣೆಯಲ್ಲಿ ಕೆಡವಿಹಾಕಿತ್ತು. ಇಂದಿನ ರಾಜಕೀಯದಲ್ಲಿ ಅಪರೂಪವಾಗಿರುವ ಅಭಿವೃದ್ಧಿಯ ಮುನ್ನೋಟ ಮತ್ತು ಸ್ವಚ್ಚ ರಾಜಕಾರಣದ ಹಂಬಲವನ್ನು ಹೊಂದಿರುವ ಎಚ್.ಕೆ.ಪಾಟೀಲ್ ಮತ್ತು ಡಿ.ಆರ್.ಪಾಟೀಲ್ ಎಂಬ ಸೋದರರು  ರಾಮುಲು ಅವರ `ಕೊಡುಗೈ ದಾನಿ' ವ್ಯಕ್ತಿತ್ವದ ಎದುರು ನಿಸ್ಸಹಾಯಕರಾಗಿದ್ದರು.  ಹಣದ ಬಲದಿಂದ ನೋಡನೋಡುತ್ತಿದ್ದಂತೆಯೇ ರಾಮುಲು ಪ್ರತಿಸಾಮ್ರಾಜ್ಯವನ್ನು ಕಟ್ಟಿ ನಿಲ್ಲಿಸಿದ್ದರು.
ಗತವೈಭವದ ಆ ದಿನಗಳನ್ನು ಮೆಲುಕುಹಾಕುತ್ತಾ ವಿರಹಿಗಳಂತೆ ನಿಟ್ಟುಸಿರು ಬಿಡುತ್ತಿರುವ ಹಳೆಯ ಫಲಾನುಭವಿಗಳನ್ನು ಈಗಲೂ ಗದಗ ನಗರದ ಬೀದಿಗಳಲ್ಲಿ ಕಾಣಬಹುದು. ಕ್ರಿಕೆಟ್, ನಾಟಕ, ಮದುವೆ, ಸಾವು ಎಲ್ಲವೂ ದುಡ್ಡು ಹಂಚಲಿಕ್ಕೆ ಒಂದು ನೆಪವಾಗಿತ್ತು ಅಷ್ಟೆ. ಈ ಊರಲ್ಲಿ ಇಂತಹ ರಾಜಕೀಯ ಸಂಸ್ಕೃತಿಗೆ ಅವಕಾಶ ಇರಲಾರದು ಎಂದು ತಿಳಿದುಕೊಂಡವರೆಲ್ಲ ಮೂಗಿನ ಮೇಲೆ ಬೆರಳಿಡುವ ರೀತಿಯಲ್ಲಿ ಜನ ಕಿಂದರಿಜೋಗಿಯ ಹಿಂದೆ ಹೋಗಿದ್ದ ಮೂಷಕಸಂಕುಲದಂತೆ ಕೊಚ್ಚಿಕೊಂಡು ಹೋಗಿದ್ದರು.
ಎಚ್.ಕೆ.ಪಾಟೀಲರ ಸಹಕಾರ ತತ್ವದ ಪಾಠ, ಡಿ.ಆರ್.ಪಾಟೀಲರ ಗ್ರಾಮಸ್ವರಾಜ್ಯದ ಬಗೆಗಿನ ಬೋಧನೆಯನ್ನು ಕೇಳುವವರೇ ಇಲ್ಲದಂತಾಗಿತ್ತು. ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಪರಾಭವ ಹೊಂದಿದ್ದರು. ಇವೆಲ್ಲವೂ ಈಗ ಹಳೆಯ ಕತೆ.  ಐದೇ ವರ್ಷಗಳ ಅವಧಿಯಲ್ಲಿ ರಾಮುಲು ಎಂಬ ಸುಂಟರಗಾಳಿ ಬೀಸಿ ಬಂದಷ್ಟೆ ವೇಗವಾಗಿ ಶಕ್ತಿ ಕಳೆದುಕೊಂಡು ದುರ್ಬಲವಾಗಿ ಹುಟ್ಟಿದೂರಿನಲ್ಲಿಯೇ  ಅಸ್ತಿತ್ವ ಉಳಿಸಿಕೊಳ್ಳಲು ಒದ್ದಾಡುತ್ತಿದೆ.  ಗದಗ ಜಿಲ್ಲೆಯ ಐದು ವರ್ಷಗಳ ಕಿರು ಅವಧಿಯಲ್ಲಿ ನಡೆದ ಕ್ಷಿಪ್ರಗತಿಯ ರಾಜಕೀಯದ ಏಳು-ಬೀಳುಗಳು ರಾಜಕೀಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಒಳ್ಳೆಯ ವಸ್ತು.
`ನಿಮ್ಮ ತಪ್ಪು ಇರಲಿಲ್ಲವೇ?' ಎಂದು ಚುನಾವಣಾ ಪ್ರಚಾರದಲ್ಲಿದ್ದ ಎಚ್.ಕೆ.ಪಾಟೀಲರನ್ನು  ಕೇಳಿದೆ. ಅವರು ಎಂದಿನಂತೆ ನಕ್ಕು ಸುಮ್ಮನಾದರು. ಇದೇ ಪ್ರಶ್ನೆಯನ್ನು ಜನರನ್ನು ಕೇಳಿದೆ. `ಮನುಷ್ಯ ಒಳ್ಳೆಯವರು, ಪ್ರಾಮಾಣಿಕರು, ಬುದ್ಧಿವಂತರು. ಆದರೆ ಸಾಮಾನ್ಯ ಮನುಷ್ಯರ ಜತೆ ಬೆರೆಯುತ್ತಿರಲಿಲ್ಲ. ಅವರದ್ದೇನಿದ್ದರೂ ಹುಬ್ಬಳ್ಳಿ ಕ್ಯಾಂಪ್. ಪಾಟೀಲ್ ಸೋದರರು ಮತ್ತು ರಾಮುಲು ಅವರ ವ್ಯಕ್ತಿತ್ವಗಳ ನಡುವೆ ರಾತ್ರಿಹಗಲುಗಳ ಅಂತರ ಇದೆ. ಸೋದರರಿಬ್ಬರದ್ದೂ ಥಟ್ಟನೆ ಆಕರ್ಷಿಸುವ ವ್ಯಕ್ತಿತ್ವ ಅಲ್ಲ, ನಿಧಾನವಾಗಿ ಅರ್ಥಮಾಡಿಕೊಳ್ಳುವಂತಹದ್ದು. ಹಿರಿಯರಿಗೆ ಇದು ಗೊತ್ತಿತ್ತು, ಅಷ್ಟೊಂದು ವ್ಯವಧಾನ ಇಲ್ಲದ ಕಿರಿಯರು ಥಳುಕುಬಳುಕಿನ ರಾಜಕೀಯದ ಹಿಂದೆ ಹೋಗಿಬಿಟ್ಟರು. ಸಂಕೋಚ ಇಲ್ಲದೆ  ಎಲ್ಲರ ಜತೆ ಬೆರೆಯುವ  `ಹಳ್ಳಿಹೈದ' ರಾಮುಲು `ನಮ್ಮವನು' ಎಂದು ಅನಿಸಿದ್ದು ಕೂಡಾ ಪಾಟೀಲ್ ಸೋಲಿಗೆ ಕಾರಣ ಇರಬಹುದು' ಎಂದರು ವಕೀಲರೊಬ್ಬರು.
ಬಹುಶಃ ಎಚ್‌ಕೆ ಬದಲಿಗೆ ಡಿ.ಆರ್. ಪಾಟೀಲರು ಸ್ಪರ್ಧಿಸಿದ್ದರೆ ಗೆದ್ದುಬಿಡುತ್ತಿದ್ದರೋ ಏನೋ ಎಂದು ಹೇಳುವವರೂ ಇದ್ದಾರೆ. ಮೂರು ಬಾರಿ ತಾನು ಪ್ರತಿನಿಧಿಸಿದ್ದ ಕ್ಷೇತ್ರವನ್ನು ಮರುಮಾತಿಲ್ಲದೆ ತಮ್ಮನಿಗೆ ಕೊಟ್ಟುಬಿಟ್ಟವರು ಡಿ.ಆರ್.ಪಾಟೀಲರು. ತನ್ನ ಸ್ಥಾನವನ್ನು ಬಿಟ್ಟುಕೊಟ್ಟಿರುವುದು ಮಾತ್ರ ಅಲ್ಲ ತಮ್ಮನ ಗೆಲುವಿಗಾಗಿ ರಾತ್ರಿಹಗಲು ಶ್ರಮಿಸುತ್ತಿರುವವರು ಡಿ.ಆರ್.ಪಾಟೀಲ್. ಭಾರತದ ರಾಜಕಾರಣದಲ್ಲಿ ಇಂತಹ ಉದಾಹರಣೆಗಳು ಇಲ್ಲವೇ ಇಲ್ಲವೆನ್ನುವಷ್ಟು ಅಪರೂಪ.
ರಾಜಕಾರಣಿಗಳು ಸೋಲಿನಿಂದ ಪಾಠವನ್ನು ಕಲಿಯುವುದು ಕಡಿಮೆ. ಆದರೆ ಎಚ್.ಕೆ.ಪಾಟೀಲ್ ಸ್ವಲ್ಪ ಭಿನ್ನ ರಾಜಕಾರಣಿ. ತನ್ನ ದೋಷವನ್ನು ಎತ್ತಿ ತೋರಿಸಿದ ಚುನಾವಣಾ ಫಲಿತಾಂಶದಿಂದ ಪಾಠ ಕಲಿತ ಎಚ್‌ಕೆ ಜನರನ್ನು ನೇರವಾಗಿ ಮುಟ್ಟಬಲ್ಲಂತಹ ದಾರಿಯ ಹುಡುಕಾಟದಲ್ಲಿದ್ದಾಗ ಅವರಿಗೆ ತೋಚಿದ್ದು ಶುದ್ಧ ಕುಡಿಯುವ ನೀರು ಪೂರೈಕೆಯ ಯೋಜನೆ.  ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆ ಗದಗ. ಗದಗ ನಗರದಲ್ಲಿಯೇ 20-25 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯಲಿಕ್ಕೆ ನೀರು ಕೊಟ್ಟರಷ್ಟೇ ಸಾಕು ಎನ್ನುವ ವಾತಾವರಣ ಇದೆ. ಇನ್ನು ಶುದ್ಧ ಕುಡಿಯುವ ನೀರನ್ನು ಕೊಡುವವರು ಯಾರು? ತಮ್ಮ ಆಸ್ಪತ್ರೆಯಲ್ಲಿದ್ದ ಇಂತಹದ್ದೊಂದು ಘಟಕವನ್ನು ನೋಡಿದ ಪಾಟೀಲರಿಗೆ ಇದನ್ನು ಸಾರ್ವಜನಿಕರಿಗಾಗಿಯೂ ನಿರ್ಮಿಸಿದರೆ ಹೇಗೆ ಎನ್ನುವ ಯೋಚನೆ ಬಂತು. ಇದರ ಪರಿಣಾಮವಾಗಿ ಗದಗ ಮತ್ತು ಸುತ್ತಮುತ್ತಲಿನ 101 ಕಡೆಗಳಲ್ಲಿ  ದಿನದ 24 ಗಂಟೆಗಳ ಕಾಲ `ಶುದ್ಧ ಜೀವ ಜಲ' ನೀಡುವ ಘಟಕಗಳನ್ನು ಸ್ಥಾಪಿಸಿದ್ದಾರೆ.
`ಶುದ್ಧ ಜೀವ ಜಲ' ಘಟಕದ ಮುಂದೆ ನೀರಿಗೆ ನಿಂತ ಜನಕೊಳವೆಬಾವಿ ನೀರನ್ನೇ ಆಧುನಿಕ ತಂತ್ರಜ್ಞಾನದ ಮೂಲಕ ಏಳುಹಂತಗಳಲ್ಲಿ ಶುದ್ಧೀಕರಿಸಿ ಹತ್ತು ಪೈಸೆಗೆ ಹತ್ತು ಲೀಟರ್‌ನಂತೆ ನೀಡಲಾಗುತ್ತಿದೆ. ಒಂದೊಂದು ಘಟಕಗಳಲ್ಲಿಯೂ ಹತ್ತರಿಂದ ಹದಿನೈದು ಸಾವಿರ ಲೀಟರ್ ನೀರನ್ನು ಜನ ಕೊಂಡೊಯ್ಯುತ್ತಾರೆ. ರಾಜಕೀಯದಲ್ಲಿ ವಿರೋಧಿಗಳಿಗೆ ನೀರು ಕುಡಿಸಿ ಗೆಲ್ಲುವುದುಂಟು. ಎಚ್.ಕೆ. ಪಾಟೀಲ್ ತಾನು ನಂಬಿದ ಜನರಿಗೆ ನೀರು ಕುಡಿಸಿ ಗೆಲ್ಲಲು ಹೊರಟಿದ್ದಾರೆ. `ಪಾಟೀಲರು ಸೋಲದೆ ಇದ್ದಿದ್ದರೆ ಇಂತಹದ್ದೊಂದು ಯೋಜನೆ ಬರುತ್ತಿತ್ತೊ ಇಲ್ಲವೋ ಗೊತ್ತಿಲ್ಲ. ಈ ದೃಷ್ಟಿಯಿಂದ ಅವರು ಸೋತಿದ್ದು ಒಳ್ಳೆಯದೇ ಆಯಿತು' ಎಂದ ಎಚ್‌ಕೆ ಅಭಿಮಾನಿಯೊಬ್ಬ ಮುಗುಳ್ನಗುತ್ತಾ.
ಗದಗ ಕ್ಷೇತ್ರ ಮಾತ್ರವಲ್ಲ ಇಡೀ ಜಿಲ್ಲೆಯ ರಾಜಕೀಯದ ಗಾಳಿ ದಿಕ್ಕು ಬದಲಾಗಿರುವ ಸೂಚನೆಗಳು ಹೋದಲ್ಲಿ ಬಂದಲ್ಲಿ ಸಿಗುತ್ತವೆ. ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರೋಣ ಜಿಲ್ಲೆಯ ಗಜೇಂದ್ರಗಡ ಮತ್ತು ನರಗುಂದ ಜಿಲ್ಲೆಯನ್ನು ಹೊರತುಪಡಿಸಿದರೆ ಉಳಿದೆಲ್ಲೆಡೆ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗದಗ-ಬೆಟಗೇರಿಯ 35 ಸ್ಥಾನಗಳಲ್ಲಿ 20, ಮುಳಗುಂದದ ಎಲ್ಲ 16 ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ರಾಮುಲು ಗಾಳಿಯ ಬಲದಿಂದಾಗಿ ಗದಗ ಕ್ಷೇತ್ರದಲ್ಲಿ ಗೆದ್ದ ಬಿಜೆಪಿಯ ಶ್ರಿಶೈಲಪ್ಪ ಬಿದರೂರು ಈಗ ಗಾಳಿ ಇಲ್ಲದ ಬಲೂನ್ ಆಗಿದ್ದಾರೆ. ಕೆಜೆಪಿಗೆ ಹೋಗಿಯೇ ಬಿಟ್ಟರು ಎಂದು ಹೇಳಲಾಗುತ್ತಿದ್ದ ಬಿದರೂರು ಕೊನೆಗೂ ಬಿಜೆಪಿಯಲ್ಲಿಯೇ ಉಳಿದು ಅಭ್ಯರ್ಥಿಯಾಗಿದ್ದಾರೆ. ಅವರು ಆ ಕಡೆ ಹೋದರೆ ತಮಗೆ ಟಿಕೆಟ್ ಖಂಡಿತ ಎಂದು ಕಾಯುತ್ತಿದ್ದ ಎಸ್.ಬಿ.ಸಂಕಣ್ಣವರ ಈಗ ಅನಿವಾರ್ಯವಾಗಿ ಕೆಜೆಪಿ ಅಭ್ಯರ್ಥಿ. ಇವರ ಜತೆಗೆ ಬಿಎಸ್‌ಆರ್ ಕಾಂಗ್ರೆಸ್‌ನ ಅನಿಲ್ ಮೆಣಸಿನಕಾಯಿ ಕಣದಲ್ಲಿದ್ದಾರೆ. ಇವರು ಮೂವರು ಲಿಂಗಾಯತ ಪಂಚಮಸಾಲಿ ಬಣಕ್ಕೆ ಸೇರಿದವರಾಗಿರುವುದು ಜಾತಿ ಲೆಕ್ಕಾಚಾರ ಕೂಡಾ ಪಾಟೀಲರ ಪರವಾಗಿರುವಂತೆ ಮಾಡಿದೆ. ಜೆಡಿಎಸ್ ಅಭ್ಯರ್ಥಿಯ ಸುಳಿವೇ ಇಲ್ಲ.
ಹಾವೇರಿ ಜಿಲ್ಲೆ ಬಿಟ್ಟರೆ ಯಡಿಯೂರಪ್ಪನವರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು ಗದಗ ಜಿಲ್ಲೆಯ ಮೇಲೆ. ಜಗದೀಶ್ ಶೆಟ್ಟರ್ ಅವರಿಗೆ ವೈಯಕ್ತಿಕವಾಗಿ ಸಮೀಪದವರಾಗಿರುವ ಕಳಕಪ್ಪ ಬಂಡಿ (ರೋಣ) ಅವರನ್ನು ಹೊರತುಪಡಿಸಿದರೆ ಉಳಿದ ಮೂವರು ಶಾಸಕರಾದ ಶ್ರಿಶೈಲಪ್ಪ ಬಿದರೂರು (ಗದಗ), ಸಿ.ಸಿ. ಪಾಟೀಲ್ (ನರಗುಂದ) ಮತ್ತು ರಾಮಣ್ಣ ಲಮಾಣಿ (ಶಿರಹಟ್ಟಿ) ಬಹಿರಂಗವಾಗಿಯೇ ಯಡಿಯೂರಪ್ಪನವರ ಜತೆ ಗುರುತಿಸಿಕೊಂಡಿದ್ದರು. ಕೊನೆಗೆ ಮೂವರೂ ಬಿಜೆಪಿಯಲ್ಲಿಯೇ ಉಳಿದರು. ಇದರಿಂದಾಗಿ ಕೆಜೆಪಿ ಕೂಡಾ ಇಲ್ಲಿ ದುರ್ಬಲ. ಸದ್ಯಕ್ಕೆ ಎಲ್ಲ ರಾಜಕೀಯ ಅನುಕೂಲತೆಗಳು ಪಾಟೀಲ್ ಪರವಾಗಿಯೇ ಇದೆ. ಇದನ್ನು ಕಂಡ ರಾಜಕೀಯ ವಿರೋಧಿಗಳು ಪಾಟೀಲ್ ವಿರುದ್ಧ ಏಕ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಕೊನೆಗಳಿಗೆಯಲ್ಲಿ ಪ್ರಯತ್ನ ನಡೆಸಿದ್ದರು. ಇಂತಹ ಯಾವ ಪ್ರಯತ್ನವೂ ಈ ಬಾರಿ ಎಚ್ಕೆಯವರಿಗೆ ಇರುವ ಅವಕಾಶವನ್ನು ಕಿತ್ತುಕೊಳ್ಳಲಾರದೇನೋ? ಚುನಾವಣಾ ರಾಜಕೀಯವೇನೇ ಇರಲಿ, ಆದರೆ ಎಚ್,ಕೆ. ಪಾಟೀಲ್ ಅವರಂತಹ ರಾಜಕಾರಣಿಗಳು  ವಿಧಾನಸಭೆಯಲ್ಲಿ ಇರಬೇಕಾಗಿರುವುದು ನ್ಯಾಯ.
ಹುಲಕೋಟಿ ಮಾದರಿ
ಪಾಟೀಲ್ ಸೋದರರಲ್ಲಿ ಬಹಳಷ್ಟು ಕಡಿಮೆ ರಾಜಕಾರಣಿಗಳಲ್ಲಿರುವ ಅಭಿವೃದ್ಧಿಯ ಮುನ್ನೋಟ ಇದೆ. ಇದು ಕುಟುಂಬದ ಹಿರಿಯ ಕೆ.ಎಚ್.ಪಾಟೀಲರಿಂದ ವಂಶಪರಂಪರೆಯಾಗಿ ಬಂದ ಗುಣ. ಈ ಮುನ್ನೋಟಕ್ಕೆ ಸಾಕ್ಷಿ ಹುಲಕೋಟಿ.  ಈ ಊರಿನ ಸುಮಾರು 36 ಎಕರೆ ಜಮೀನಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ವಸತಿ ಶಾಲೆ, 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಪ್ರಕೃತಿ ಚಿಕಿತ್ಸೆಯ ಘಟಕ ಮತ್ತು ಕೃಷಿ ವಿಕಾಸ ಕೇಂದ್ರಗಳಿವೆ. ಯುವ ಉದ್ಯಮಶೀಲರಿಗಾಗಿಯೇ ನಿರ್ಮಿಸಲಾಗಿರುವ ನೂರು ಉದ್ಯಮಗಳ ಕೈಗಾರಿಕಾ ಕೇಂದ್ರ ಇದೆ. ಎಲ್ಲವೂ ಸಹಕಾರ ತತ್ವದಡಿಯಲ್ಲಿಯೇ ಸ್ಥಾಪಿಸಲಾಗಿದೆ.
ಸುಮಾರು ಹತ್ತು ಸಾವಿರ ಜನಸಂಖ್ಯೆಯ ಪುಟ್ಟ ಊರಿನಲ್ಲಿ ಗದಗ ನಗರದಲ್ಲಿ ಇಲ್ಲದ ಒಳಚರಂಡಿ ವ್ಯವಸ್ಥೆ ಇದೆ. ಎಲ್ಲರಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಇದೆ. ಇಲ್ಲಿನ ಸರ್ವಜಾತಿಗಳ ಸಾರ್ವಜನಿಕ ಸ್ಮಶಾನವನ್ನು ಸುಂದರ ಉದ್ಯಾನದ ರೀತಿ ನಿರ್ಮಿಸಿ ನಿರ್ವಹಿಸಲಾಗುತ್ತಿದೆ. ಇಲ್ಲಿನ ವಸತಿ ಶಾಲೆಯಲ್ಲಿ ಕಲಿತ ಕನಿಷ್ಠ 25 ವಿದ್ಯಾರ್ಥಿಗಳು ವಿದೇಶಗಳಲ್ಲಿ ನೆಲೆಸಿದ್ದಾರೆ.
ಗ್ರಾಮೀಣ ಅಭಿವೃದ್ಧಿಗೆ ಹುಲಕೋಟಿಗಿಂತ ಪರಿಪೂರ್ಣವಾದ ಇನ್ನೊಂದು ಮಾದರಿ ಇಡೀ ದೇಶದಲ್ಲಿ ಇರಲಾರದೇನೋ? ಆದರೆ ಪಾಟೀಲ್ ಸೋದರರು ಇದನ್ನು ಕನಿಷ್ಠ ಗದಗ ಜಿಲ್ಲೆಗಾದರೂ  ಯಾಕೆ ವಿಸ್ತರಿಸಲಿಲ್ಲವೋ ಗೊತ್ತಿಲ್ಲ. ಬಹಳಷ್ಟು ಮತದಾರರು ಕೂಡಾ ಕೇಳುವ ಪ್ರಶ್ನೆ ಇದು.

Wednesday, April 17, 2013

ಹಾವೇರಿಯಲ್ಲಿ ಕಾವೇರಿದ ಚುನಾವಣಾ ಕದನ

ಹಾವೇರಿ: ಭಾರತೀಯ ಜನತಾ ಪಕ್ಷದ ಆಳ್ವಿಕೆಯ ಐದು ವರ್ಷಗಳ ಅವಧಿಯಲ್ಲಿ ಸದಾ ಸುದ್ದಿಯಲ್ಲಿದ್ದ ಜಿಲ್ಲೆ ಹಾವೇರಿ. ಅಧಿಕಾರಕ್ಕೆ ಬಂದ ಪ್ರಾರಂಭದ ದಿನಗಳ ವಿಜಯೋತ್ಸಾಹಕ್ಕೆ `ದೃಷ್ಟಿಬೊಟ್ಟು' ಇಟ್ಟಂತೆ ನಡೆದ ರೈತರ ಮೇಲಿನ ಗೋಲಿಬಾರ್, ಬಿಜೆಪಿ ತೊರೆದು ಬಂದ ಬಿ.ಎಸ್.ಯಡಿಯೂರಪ್ಪನವರ ಶಕ್ತಿ ಪ್ರದರ್ಶನದ ಸಮಾವೇಶ, ಒಂದು ಜಿಲ್ಲೆಯ
ಬಹುಪಾಲು ಬಿಜೆಪಿ ಶಾಸಕರ ಪಕ್ಷಾಂತರ... ಎಲ್ಲವೂ ನಡೆದದ್ದು ಈ ಜಿಲ್ಲೆಯಲ್ಲಿ.
ಕಳೆದ ಚುನಾವಣೆಯಲ್ಲಿ ಇಲ್ಲಿನ ಆರರಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಅವರಲ್ಲಿ ನಾಲ್ಕು ಮಂದಿಯ ಜತೆಗೆ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಿವರಾಜ್ ಸಜ್ಜನರ್ ಕೂಡಾ ಈಗ ಕೆಜೆಪಿ ಅಭ್ಯರ್ಥಿಗಳು. ಯಡಿಯೂರಪ್ಪ  ಸ್ಪರ್ಧಿಸದೆ ಇದ್ದರೂ ಈ ಜಿಲ್ಲೆ ಅವರ ಪಾಲಿನ ಪ್ರತಿಷ್ಠೆಯ ಕಣ. ಇಲ್ಲಿ ಅವರು ಗೆದ್ದರೆ ಕೆಜೆಪಿ ಚುನಾವಣೆಯನ್ನು ಅರ್ಧ ಗೆದ್ದಂತೆ.
ತನ್ನನ್ನು ನಂಬಿಕೊಂಡು ಬೆನ್ನಹಿಂದೆ ಬಂದ ಐದು ಮಂದಿ ಬೆಂಬಲಿಗರನ್ನು ಇಲ್ಲಿ ಗೆಲ್ಲಿಸುವ ಜತೆಯಲ್ಲಿ ಕೊನೆಕ್ಷಣದಲ್ಲಿ ಕೈಕೊಟ್ಟ `ನೀಲಿ ಕಣ್ಣಿನ ಹುಡುಗ' ಬಸವರಾಜ್ ಬೊಮ್ಮಾಯಿ ಅವರನ್ನು ಸೋಲಿಸುವ ಸವಾಲು ಯಡಿಯೂರಪ್ಪನವರ ಮುಂದಿದೆ. ಇದಕ್ಕಾಗಿ ಜಾತಿ,ದುಡ್ಡು, ಕಣ್ಣೀರು ಎಲ್ಲವೂ ಬಳಕೆಯಾಗುತ್ತಿದೆ.  ಸಾದರ ಜಾತಿಗೆ ಸೇರಿದ ಬೊಮ್ಮಾಯಿಯವರಿಗೆ ಇದಿರಾಗಿ ಸಂಖ್ಯೆಯಲ್ಲಿ ಹೆಚ್ಚಿರುವ ಮತ್ತು ಸಂಘಟನಾತ್ಮಕವಾಗಿ ಬಲವಾಗಿರುವ ಪಂಚಮಸಾಲಿ ಬಣಕ್ಕೆ ಸೇರಿರುವ ಬಾಪುಗೌಡ ಪಾಟೀಲರನ್ನು ಶಿಗ್ಗಾವಿ ಕ್ಷೇತ್ರದಲ್ಲಿ ಯಡಿಯೂರಪ್ಪ ಅಖಾಡಕ್ಕಿಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಣ್ಣುಮುಚ್ಚಿ ಬೊಮ್ಮಾಯಿ ಅವರನ್ನು ಬೆಂಬಲಿಸಿದ್ದ ಪಂಚಮಸಾಲಿ ಸಮುದಾಯ ಈಗ ಕಣ್ಣುಬಿಡುತ್ತಿರುವುದಕ್ಕೆ ಅಲ್ಲಲ್ಲಿ ನಡೆಯುತ್ತಿರುವ ಗುಪ್ತ ಸಭೆಗಳು ಸಾಕ್ಷಿ. `ಇಪ್ಪತ್ತರ ನಂತರ ಎಲ್ಲ ನಿರ್ಧಾರ ಆಗ್ತೈತಿ. ಅಲ್ಲಿಯ ವರೆಗೆ ಸುಮ್ಮನಿರಾಕ ಹೇಳ್ಯಾರೆ, ಅಜ್ಜಾವ್ರ (ಪಂಚಮಸಾಲಿ ಮಠದ ಸ್ವಾಮಿಗಳು) ಹೇಳ್ದಂಗ ಮಾಡ್ತೇವ್ರಿ' ಎನ್ನುವ ಶಿವಾನಂದ ಬಾಗೂರು ಹಿಂದಿನ ದಿನವಷ್ಟೇ ಇಂತಹದ್ದೇ ಗುಪ್ತಸಭೆಯಲ್ಲಿ ಭಾಗವಹಿಸಿ ಬಂದವ.
`ಯಡಿಯೂರಪ್ಪನವರ ಬೆನ್ನಿಗೆ ಬೊಮ್ಮಾಯಿ ಚೂರಿ ಹಾಕಿದರು' ಎನ್ನುವ ಸಾಮಾನ್ಯ ಅಭಿಪ್ರಾಯ ಜನತೆಯಲ್ಲಿದೆ. ಕೆಜೆಪಿ ಸಮಾವೇಶಕ್ಕೆ ಮುನ್ನ ಹಾವೇರಿಯ ಶಿವರಾಜ್ ಸಜ್ಜನರ್ ಮನೆಯಲ್ಲಿ ನಡೆದ `ಟೀ ಪಾರ್ಟಿ'ಯಲ್ಲಿಯೂ ಭಾಗವಹಿಸಿ ಬೆಂಬಲ ಸೂಚಿಸಿದ್ದ ಬೊಮ್ಮಾಯಿ ನಂತರ ಯಾಕೆ ಹಿಂದೆ ಸರಿದರು ಎನ್ನುವುದು ಎಲ್ಲರ ಕುತೂಹಲದ ಪ್ರಶ್ನೆ. ಬಿಜೆಪಿಯಲ್ಲಿಯೇ ಉಳಿದರೂ ಅಲ್ಲಿಯೂ ಇವರೇನು ಸರ್ವಜನಪ್ರಿಯರಲ್ಲ. ಅವಿಭಜಿತ ಧಾರವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಇದಿರಾಗಿ ಪ್ರತಿಸ್ಪರ್ಧಿಯೊಬ್ಬನನ್ನು ನಿಲ್ಲಿಸಬೇಕೆಂಬ ರಾಜಕೀಯ ಉದ್ದೇಶದಿಂದಲೇ ಯಡಿಯೂರಪ್ಪನವರು  ಬೊಮ್ಮಾಯಿ ಅವರನ್ನು ಬೆಳೆಸಿದ್ದರು. ಇದಕ್ಕಾಗಿಯೇ ಜಲಸಂಪನ್ಮೂಲದಂತಹ ಪ್ರಮುಖ ಖಾತೆಯನ್ನು ವಹಿಸಿಕೊಡುವ ಜತೆಯಲ್ಲಿ ರಾಜಕೀಯ ಬೆಂಬಲವನ್ನು ಅವರಿಗೆ ಧಾರೆಯೆರೆದಿದ್ದರು. ಈ ಹುನ್ನಾರವನ್ನು ಬಲ್ಲ ಶೆಟ್ಟರ್ ಹೃತ್ಪೂರ್ವಕವಾಗಿ ಬೊಮ್ಮಾಯಿ ಗೆಲುವಿಗೆ ಪ್ರಯತ್ನಿಸುತ್ತಾರೆ ಎಂದು ಹೇಳಲಾಗದು.   
ಹಾವೇರಿ ಜಿಲ್ಲೆಯಲ್ಲಿ ಯಡಿಯೂರಪ್ಪನವರ ಸೇನಾಪತಿ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ. ಬೊಮ್ಮಾಯಿಯವರಂತೆ ಉದಾಸಿಯವರಿಗೂ ಯಡಿಯೂರಪ್ಪನವರು ಪ್ರಮುಖವಾದ ಲೋಕೋಪಯೋಗಿ ಖಾತೆಯನ್ನು ನೀಡಿ ರಾಜಕೀಯವಾಗಿ ಪ್ರೊತ್ಸಾಹ ನೀಡಿದ್ದರು. ಮುಂಬೈ ಕರ್ನಾಟಕದ ಮಟ್ಟಿಗೆ ಉದಾಸಿ-ಬೊಮ್ಮಾಯಿ ಇಬ್ಬರೂ ಯಡಿಯೂರಪ್ಪನವರ ಎಡಗೈ-ಬಲಗೈಗಳಾಗಿದ್ದವರು. ಉದಾಸಿ ವಿಶ್ವಾಸ ಭಂಗಗೊಳಿಸದೆ ಯಡಿಯೂರಪ್ಪನವರ ಜತೆಯಲ್ಲಿಯೇ ಉಳಿದಿದ್ದಾರೆ.
ಪಕ್ಕದ ಬೆಳಗಾವಿ ಜಿಲ್ಲೆಯಲ್ಲಿ ಯಡಿಯೂರಪ್ಪನವರ ಇನ್ನೊಬ್ಬ ಬಂಟ ಉಮೇಶ್ ಕತ್ತಿ ಬಿಜೆಪಿ ಲೋಕಸಭಾ ಸದಸ್ಯನಾದ ತನ್ನ ಸೋದರನ ಕಾರಣಕ್ಕಾಗಿ ಪಕ್ಷದಲ್ಲಿಯೇ ಉಳಿದರೆಂದು ಹೇಳಲಾಗುತ್ತಿದೆ. ಅಂತಹ ಸಂದಿಗ್ಧ ಪರಿಸ್ಥಿತಿಯನ್ನು ಉದಾಸಿಯವರೂ ಎದುರಿಸಿದ್ದಾರೆ. ಆದರೆ ಬಿಜೆಪಿಯಿಂದ ಲೋಕಸಭೆಗೆ ಆಯ್ಕೆಯಾಗಿರುವ ಮಗನ ರಾಜಕೀಯ ಭವಿಷ್ಯವನ್ನು ಲೆಕ್ಕಿಸದೆ ಅವರು ಕೆಜೆಪಿ ಜತೆ ಗುರುತಿಸಿಕೊಂಡಿದ್ದಾರೆ.
ಬಿಜೆಪಿ ಈಗಾಗಲೇ ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ ಅವರನ್ನು ಅಮಾನತ್‌ಗೊಳಿಸಿದೆ.ವೈಯಕ್ತಿಕವಾಗಿ ಉದಾಸಿ ಅವರಿಗೆ ತಾವು ಎದುರಿಸುತ್ತಿರುವ ಈ ಚುನಾವಣೆ ಸೆಮಿಫೈನಲ್, ಇನ್ನೊಂದು ವರ್ಷಕ್ಕೆ ಮಗ ಎದುರಿಸಲಿರುವ ಮುಂದಿನ ಲೋಕಸಭಾ ಚುನಾವಣೆಯೇ ಫೈನಲ್. ಈ ಹಿನ್ನೆಲೆಯಲ್ಲಿ ತಮ್ಮ ಹಾಗೂ ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಹಾವೇರಿ ಜಿಲ್ಲೆಯಲ್ಲಿ ಕೆಜೆಪಿಯನ್ನು ಗೆಲ್ಲಿಸುವುದು ಉದಾಸಿ ಅವರಿಗೆ ಅನಿವಾರ್ಯ.
ತಾವೂ ಸೇರಿದಂತೆ ನಾಲ್ವರು ಹಾಲಿ ಶಾಸಕರಾದ ನೆಹರೂ ಓಲೇಕಾರ್ (ಹಾವೇರಿ) ಜಿ.ಶಿವಣ್ಣ (ರಾಣೆಬೆನ್ನೂರು), ಮತ್ತು ಸುರೇಶ್‌ಗೌಡ ಪಾಟೀಲ್ (ಬ್ಯಾಡಗಿ) ಕೆಜೆಪಿಯಲ್ಲಿರುವುದು ಉದಾಸಿ ಅವರು ಹೊಂದಿರುವ ಅನುಕೂಲತೆ. ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಾನಗಲ್, ಬ್ಯಾಡಗಿ ಮತ್ತು ಹಿರೇಕೆರೂರಿನಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ಕೆಜೆಪಿ.
ಮೂಲತಃ ಜನತಾ ಪರಿವಾರಕ್ಕೆ ಸೇರಿದ್ದ ಉದಾಸಿ ಅವರಿಗೆ ಇದು ಎಂಟನೆ ಚುನಾವಣೆ. ಹಿಂದಿನ ಏಳು ಚುನಾವಣೆಗಳಲ್ಲಿ ಐದರಲ್ಲಿ ಗೆದ್ದಿದ್ದಾರೆ. ಹಿಂದಿನ ಏಳು ಚುನಾವಣೆಗಳಲ್ಲಿಯೂ ಉದಾಸಿ ಅವರಿಗೆ ಪ್ರತಿಸ್ಪರ್ಧಿಯಾಗಿದ್ದವರು ಕಾಂಗ್ರೆಸ್ ಪಕ್ಷದ ಮನೋಹರ್ ತಹಶೀಲ್ದಾರ್. ಈ ಬಾರಿಯೂ ಅವರೇ ಎದುರಾಳಿ. ವಿಚಿತ್ರವೆಂದರೆ ಚುನಾವಣೆಯಲ್ಲಿ ಜಾತಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಹೇಳಲಾಗುತ್ತಿದ್ದರೂ ಇಬ್ಬರು ಅಭ್ಯರ್ಥಿಗಳಿಗೂ ಹೇಳಿಕೊಳ್ಳುವಂತಹ ಜಾತಿ ಬಲ ಇಲ್ಲ. ಉದಾಸಿ ಅವರ ಲಿಂಗಾಯತ ಬಣವಾದ ಬಣಜಿಗರ ಸಂಖ್ಯೆ ಅವರ ಸ್ವಂತ ಕ್ಷೇತ್ರವಾದ ಹಾನಗಲ್‌ನಲ್ಲಿ ಕಡಿಮೆ.
ಹಿಂದುಳಿದ ಬೆಸ್ತ ಜಾತಿಗೆ ಸೇರಿದ ಮನೋಹರ್ ತಹಶೀಲ್ದಾರ್ ಅವರ ಜಾತಿಯವರನ್ನು ದೂರದರ್ಶಕ ಹಿಡಿದುಕೊಂಡು ಹುಡುಕಬೇಕು. ಈ ದೃಷ್ಟಿಯಿಂದ ಹಾನಗಲ್ ಮಟ್ಟಿಗೆ ಚುನಾವಣೆ ಜಾತ್ಯತೀತವಾದುದು. `ಬಿಜೆಪಿಯಲ್ಲಿದ್ದಾಗ ಈ ವೈಶಿಷ್ಟತೆಯ ಲಾಭವನ್ನು ಪಡೆದುಕೊಳ್ಳಲಾಗಿರಲಿಲ್ಲ. ಪ್ರಾರಂಭದಿಂದಲೂ ನನ್ನನ್ನು ಬೆಂಬಲಿಸುತ್ತಾ ಬಂದಿದ್ದ ಮುಸ್ಲಿಂ ಮತದಾರರು ಬಿಜೆಪಿಯಿಂದ ಸ್ಪರ್ಧಿಸಿದ್ದ ಕಳೆದೆರಡು ಚುನಾವಣೆಗಳಲ್ಲಿ ದೂರವಾಗಿದ್ದರು. ಈಗ ಮತ್ತೆ ಹತ್ತಿರವಾಗಿದ್ದಾರೆ. ನಗರಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಸ್ಲಿಂ ಕೇರಿಗಳಲ್ಲಿಯೇ ನಮ್ಮ ಅಭ್ಯರ್ಥಿಗಳು ಗೆದ್ದಿರುವುದು ಇದಕ್ಕೆ ಸಾಕ್ಷಿ' ಎನ್ನುತ್ತಾರೆ ಸಿ.ಎಂ.ಉದಾಸಿ.
ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹುಬ್ಬಳ್ಳಿ ಕೇಂದ್ರ ಸ್ಥಾನವಾಗಿರುವಂತೆ ಕೆಜೆಪಿಗೆ ಹಾವೇರಿ. ಪಕ್ಷದ ರಾಜ್ಯ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ಅಭ್ಯರ್ಥಿಗಳ ತವರೂರಾಗಿರುವ ಅವಿಭಜಿತ ಧಾರವಾಡ ಜಿಲ್ಲೆಯ ಚುನಾವಣೆ ಬಿಜೆಪಿ ಪಾಲಿಗೂ ಪ್ರತಿಷ್ಠೆಯ ಪ್ರಶ್ನೆ. ಕೆಜೆಪಿ-ಬಿಜೆಪಿ ನಡುವಿನ ನಿಜವಾದ ರಾಜಕೀಯ ಸಮರಕ್ಕೆ ಹಾವೇರಿ ಜಿಲ್ಲೆ ರಣರಂಗವಾಗಲಿದೆ. ಈ ಎರಡು ಪಕ್ಷಗಳ ಹೊಡೆದಾಟವನ್ನು ದೂರದಿಂದಲೇ ನೋಡುತ್ತಿರುವ  ಕಾಂಗ್ರೆಸ್ ಪಕ್ಷ ಯುದ್ಧಕ್ಕಿಳಿಯದೆ ಯುದ್ಧದ ಲಾಭ ಪಡೆಯುವ ಲೆಕ್ಕಾಚಾರದಲ್ಲಿದೆ.
`ಅತ್ತ ಸಾಯಂಗಿಲ್ಲ, ಇತ್ತ ಬದುಕೊಂಗಿಲ್ಲ...'
ಚುನಾವಣಾ ರಾಜಕೀಯದ ಗದ್ದಲದಲ್ಲಿ ಐದು ವರ್ಷಗಳ ಹಿಂದೆ ರೈತರ ಮೇಲೆ ನಡೆದ ಗೋಲಿಬಾರ್ ಘಟನೆ ಈ ಜಿಲ್ಲೆಯ ಸಾಮಾನ್ಯ ಮತದಾರನ ನೆನೆಪಿನಿಂದಲೂ ಮರೆಯಾಗಿ ಹೋಗಿದೆ. ಮೃತಪಟ್ಟ ಇಬ್ಬರು ರೈತರಾದ ಪುಟ್ಟಪ್ಪ ಹೊನ್ನತ್ತಿ ಮತ್ತು ಸಿದ್ದಲಿಂಗಪ್ಪ ಚೂರಿ ಕುಟುಂಬಗಳ ಸದಸ್ಯರು ಕೂಡಾ `ಸಮಸ್ಯೆ ಏನೂ ಇಲ್ಲಾರಿ, ಆರಾಮವಾಗಿದ್ದೀವಿ' ಎಂದು ಹೇಳುವಷ್ಟು ನಿಶ್ಚಿಂತೆಯಾಗಿದ್ದಾರೆ. ಚುನಾವಣೆಯಲ್ಲಿ ಪ್ರಧಾನ ವಿಷಯವಾಗಿ ರಾಜಕೀಯ ಪಕ್ಷಗಳನ್ನು `ಸತ್ತವರು ರೈತರಲ್ಲ ಗೂಂಡಾಗಳು' ಎಂದು ನಾಲಗೆ ಸಡಿಲಬಿಟ್ಟು ಮಾತನಾಡಿದ್ದ ಹಾವೇರಿ ಶಾಸಕ ನೆಹರೂ ಓಲೇಕಾರ್ ಕೆಜೆಪಿಯಿಂದ  ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ. ಗೋಲಿಬಾರ್ ಘಟನೆಯ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಜಗನ್ನಾಥ್ ಶೆಟ್ಟಿ ಆಯೋಗದ ವರದಿ ವಿಧಾನಸೌಧದಲ್ಲಿ ಎಲ್ಲೋ ದೂಳು ತಿನ್ನುತ್ತಾ ಬಿದ್ದಿದೆ.
ಗಾಯಗೊಂಡಿದ್ದ ಹದಿಮೂರು ಮಂದಿ ಮಾತ್ರ ನರಕಯಾತನೆ ಅನುಭವಿಸುತ್ತಿದ್ದಾರೆ. `ಗುಂಡು ಬಿದ್ದು ಸತ್ತ್ ಹೋಗಿದ್ರೆ ಮನಿಮಂದಿಗೆ ಒಂದಿಷ್ಟ್ ರೊಕ್ಕ ಬರ‌್ತಿತ್ತು. ಈಗ ಅತ್ತ ಸಾಯಂಗಿಲ್ಲ, ಇತ್ತ ಬದುಕೊಂಗಿಲ್ಲ ತ್ರಿಸಂಕು ಸ್ಥಿತಿ ಆಗೈತೆ. ಇದರಿಂದ ಪಾರು ಮಾಡಿ' ಎಂದು ಕೈಮುಗಿಯುತ್ತಾನೆ ಆಲದಕಟ್ಟಿಯ ಅಬ್ದುಲ್ ರಜಾಕ್. ಇದೇ ಸ್ಥಿತಿ ಉಳಿದವರದ್ದು. ಗುಂಡು ತಗಲಿದ್ದ ಈತನ ಬಲಗೈ ಸಂಪೂರ್ಣ ನಿಷ್ಕ್ರೀಯವಾಗಿದೆ. ಹಮಾಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ರಜಾಕ್ ಕುಟುಂಬಕ್ಕೆ ಈಗ ನಾಲ್ವರು ಹೆಣ್ಣುಮಕ್ಕಳು ಮಾಡುವ ಕೂಲಿ ಕೆಲಸವೇ ಜೀವನಾಧಾರ. ಇನ್ನೊಬ್ಬ ಗಾಯಾಳು ಹೆಡಿಗ್ಗೊಂಡದ ಮಲ್ಲಪ್ಪ ಬಣಕಾರ್ ಅವರದ್ದೂ ಇದೇ ಸ್ಥಿತಿ. ತೋಳಿಗೆ ಗುಂಡು ತಗಲಿದ ನಂತರ ಬೇಸಾಯ ಮಾಡಲಿಕ್ಕಾಗದೆ ಇದ್ದ ಎರಡು ಎಕರೆ ಹೊಲವನ್ನು ಲಾವಣಿಗೆ ಕೊಟ್ಟಿದ್ದಾರೆ.
`ಮೂರೂ ಹೊತ್ತು ತೋಳು ಹರಿತೈತಿ, ನೋವ್ ಮರ‌್ಯಾಕ್ ಇಂಜಕ್ಷನ್ ಚುಚ್ಚಿಸಿಕೊಂಡು ಜೀವ್ನಾ ಸಾಕಾಗಿಹೋಗೈತಿ' ಎನ್ನುತ್ತಾರೆ ಬಣಕಾರ್.ಪೊಲೀಸರ ಲಾಠಿ ಏಟಿನಿಂದಾಗಿ ಬಲ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ನೆಲೋಗಲ್‌ನ ವೀರಭದ್ರ ಬಸವನಗೌಡರಿಗೆ ಆಗಾಗ ತಲೆ ಸುತ್ತುವುದರಿಂದ ಒಬ್ಬಂಟಿಯಾಗಿ ಮನೆಯಿಂದ ಹೊರಗೆ ಕಾಲಿಡುವ ಹಾಗಿಲ್ಲ. ಇವರೂ ಇದ್ದ ಮೂರು ಎಕರೆ ಜಮೀನನ್ನು ಲಾವಣಿಗೆ ಕೊಟ್ಟು ಅದರಿಂದ ಬರುವ ಆದಾಯದಿಂದ ಜೀವನ ಸಾಗಿಸುತ್ತಿದ್ದಾರೆ. ಈ ಗಾಯಾಳುಗಳಿಗೆಲ್ಲ ಪ್ರಾರಂಭದಲ್ಲಿ 25 ರಿಂದ 50 ಸಾವಿರ ರೂಪಾಯಿ ಕೊಟ್ಟು ಕೈತೊಳೆದುಕೊಂಡ ಸರ್ಕಾರ ಆ ಮೇಲೆ ಇವರ ಕಡೆ ಕಣ್ಣೆತ್ತಿ ನೋಡಿಲ್ಲ.  ನ್ಯಾ.ಜಗನ್ನಾಥ್ ಶೆಟ್ಟಿ ಆಯೋಗ ಶಿಫಾರಸು ಮಾಡಿದಂತೆ ಗಾಯಾಳುಗಳಾಗಿರುವ ತಮಗೆ ತಲಾ ಮೂರು ಲಕ್ಷ ರೂಪಾಯಿ ನೀಡಬೇಕೆಂದು ಕೋರಿ ಕನಿಷ್ಠ ಹತ್ತು ಬಾರಿ ಬೆಂಗಳೂರಿಗೆ ಹೋಗಿ ಅರ್ಜಿ ನೀಡಿ ಬಂದಿದ್ದಾರೆ.
`ಗೋಲಿಬಾರ್ ನಡೆದದ್ದು ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ನಡೆಸಿದ ಪ್ರತಿಭಟನೆಯನ್ನು ಹತ್ತಿಕ್ಕಲು. ಆ ಸಮಸ್ಯೆ ಈಗಲೂ ಇದೆ. ಈ ಜಿಲ್ಲೆಯಲ್ಲಿ ತುಂಗಾಭದ್ರಾ, ವರದಾ, ಕುಮದ್ವತಿ ಮತ್ತು ಧರ್ಮಾ ನದಿಗಳು ಹರಿಯುತ್ತಿದ್ದರೂ ನೀರಾವರಿ ಯೋಜನೆಗಳೇ ಇಲ್ಲ. ಏನಿದ್ದರೂ ಪಂಪ್‌ಸೆಟ್ ನೀರಾವರಿ. ಇವೆಲ್ಲವೂ ಚುನಾವಣೆಯ ಕಾಲದಲ್ಲಿ ಚರ್ಚೆಗೆ ಬರಬೇಕಿತ್ತು. ಯಾರೂ ಮಾತನಾಡುವವರೇ ಇಲ್ಲ. ರೈತರೂ ಪರಿಸ್ಥಿತಿಗೆ ಒಗ್ಗಿಹೋಗಿದ್ದಾರೆ. ಹನ್ನೆರಡು ವರ್ಷಗಳ ಹಿಂದೆ ಬಿಟಿ ಹತ್ತಿ ವಿರೋಧಿಸಿ ಚಳವಳಿ ನಡೆದ ಜಿಲ್ಲೆಯಲ್ಲಿ ಈಗ ರೈತರು ಅತಿಹೆಚ್ಚಿನ ಪ್ರದೇಶದಲ್ಲಿ ಬಿಟಿ ಹತ್ತಿ ಬೆಳೆಯುತ್ತಿದ್ದಾರೆ' ಎಂದು ದೀರ್ಘ ನಿಟ್ಟುಸಿರು ಬಿಟ್ಟರು ಕರ್ನಾಟಕ ರಾಜ್ಯ ರೈತ (ಚುನಾವಣೇತರ) ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಗುರುಮಠ್.

Monday, April 8, 2013

ರಾಹುಲ್ ಗಾಂಧಿ ಕಳೆದುಕೊಳ್ಳುತ್ತಿರುವ ಅವಕಾಶ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದೆ ಏದುಸಿರು ಬಿಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಅನುಭವ ಹೊಸದೇನಲ್ಲ. ವಿವಾದವೇ ಇಲ್ಲದೆ  ಚುನಾವಣಾ ಅಭ್ಯರ್ಥಿಗಳ ಆಯ್ಕೆ ಸುಸೂತ್ರವಾಗಿ ನಡೆದ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿ  ಇಲ್ಲ. ಟಿಕೆಟ್‌ಗಾಗಿ ಬಹಿರಂಗವಾಗಿ ನಡೆಯುತ್ತಿರುವ ಕಾದಾಟ, ಗುಟ್ಟಾಗಿ ನಡೆಯುವ ಮಸಲತ್ತು, ಪ್ರತಿಭಟನೆ, ಬಂಡಾಯ, ವಶೀಲಿ, ಆಮಿಷ, ಪ್ರಭಾವ, ಕಣ್ಣೀರು, ಜೈಕಾರ, ಧಿಕ್ಕಾರ ...ಇವೆಲ್ಲವೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯ ಭಾಗವೇ ಆಗಿಬಿಟ್ಟಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ಕಾಲದಲ್ಲಿ ದೆಹಲಿಯ ಸರ್ಕಾರಿ ಭವನಗಳು, ಹೊಟೇಲ್‌ಗಳು ತುಂಬಿ ತುಳುಕಾಡುವುದು, ಸೋನಿಯಾಗಾಂಧಿ ಮನೆ ಮತ್ತು ಎಐಸಿಸಿ ಕಚೇರಿಗಳಿರುವ ಜನಪಥ ಮತ್ತು ಅಕ್ಬರ್ ರಸ್ತೆ ತುಂಬಾ ಜನಜಂಗುಳಿ ಎಲ್ಲವೂ ಸಾಮಾನ್ಯ ದೃಶ್ಯ. ಆದರೆ ಈ ಬಾರಿ ಹೀಗಾಗಲಿಕ್ಕಿಲ್ಲ ಎಂದು ತಿಳಿದುಕೊಂಡಿದ್ದ ಒಂದಷ್ಟು ಕಡು ಆಶಾವಾದಿಗಳಿದ್ದರು.
ಇತ್ತೀಚೆಗೆ ಹಲವಾರು ವೇದಿಕೆಗಳಲ್ಲಿ ಕಾಂಗ್ರೆಸ್ ಪಕ್ಷದ ನೂತನ ಉಪಾಧ್ಯಕ್ಷ ರಾಹುಲ್‌ಗಾಂಧಿಯವರು ಮಾತನಾಡಿದ ಆದರ್ಶ ರಾಜಕಾರಣದ ಮಾತುಗಳು ಈ ಆಶಾವಾದಕ್ಕೆ ಕಾರಣ. `ರಾಜಕೀಯ ಅಧಿಕಾರದ ಹಿಂದೆ ಓಡಬೇಡಿ, ಅದು ಪಾಷಾಣ' ಎಂದು ರಾಹುಲ್ ಜೈಪುರ ಚಿಂತನಾ ಶಿಬಿರದಲ್ಲಿ ಎಚ್ಚರಿಸಿದ್ದರು. ಅಲ್ಲಿ ಅವರು ಆಡಿದ ಮಾತುಗಳು ದೇಶದ ಅಮಾಯಕ ಜನರನ್ನು ರೋಮಾಂಚನಗೊಳಿಸಿದ್ದು ಮಾತ್ರವಲ್ಲ ಕಡು ನಿರಾಶವಾದಿಗಳಲ್ಲಿ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಹಿಂದಿನ ಮಾತುಗಳ ಮುಂದುವರಿಕೆಯಂತೆ ನಂತರದ ದಿನಗಳಲ್ಲಿ ಮಾತನಾಡಿದ ರಾಹುಲ್ `ಹೈಕಮಾಂಡ್ ಸಂಸ್ಕೃತಿಯನ್ನು ಕೊನೆಗೊಳಿಸಬೇಕು' ಎಂದಿದ್ದರು. ಕೊನೆಯದಾಗಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಾರಂಭವಾಗುವಾಗ  `ಅಭ್ಯರ್ಥಿಗಳ ಆಯ್ಕೆ ಸ್ಥಳೀಯ ಮಟ್ಟದಲ್ಲಿಯೇ ನಡೆಯುತ್ತದೆ, ಯಾರೂ ದೆಹಲಿಗೆ ಬರುವ ಅಗತ್ಯ ಇಲ್ಲ' ಎಂದಿದ್ದರು. ಇವೆಲ್ಲವನ್ನು ಹೇಳಿದ ರಾಹುಲ್‌ಗಾಂಧಿಯ ನಾಲಗೆಯ ಪಸೆ ಆರುವುದರೊಳಗಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಅಸಹ್ಯ ಪ್ರದರ್ಶನ ಯಥಾ ಪ್ರಕಾರ ಪ್ರಾರಂಭವಾಗಿತ್ತು.
ರಾಹುಲ್‌ಗಾಂಧಿಯವರಂತೆ, ಅವರ ಅಮ್ಮನೂ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಂಡ ಪ್ರಾರಂಭದ ದಿನಗಳಲ್ಲಿ ಇಂತಹದ್ದೇ ಆದರ್ಶ ರಾಜಕಾರಣದ ಮಾತುಗಳನ್ನಾಡಿದ್ದು ಮಾತ್ರವಲ್ಲ ಬದಲಾವಣೆಯ ಪ್ರಯತ್ನಕ್ಕೂ ಕೈಹಾಕಿದ್ದರು. ಅಟಲಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ 1999ರಲ್ಲಿ ಎರಡನೇ ಬಾರಿ ಲೋಕಸಭಾ ಚುನಾವಣೆ ಗೆದ್ದಾಗ ಸೋನಿಯಾಗಾಂಧಿ ಕಂಗಾಲಾಗಿದ್ದರು. ಸೀತಾರಾಂ ಕೇಸರಿಯವರನ್ನು ಕೆಳಗಿಳಿಸಿ ಪಕ್ಷದ ಅಧ್ಯಕ್ಷರಾದ ಸೋನಿಯಾ ನಾಯಕತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 119 ಸ್ಥಾನಗಳನ್ನು ಗಳಿಸಿದ್ದ ಕಾಲ ಅದು. ಸೋಲಿಗೆ ಕಾರಣಗಳನ್ನು ಹುಡುಕಿ ಗೆಲುವಿಗೆ ದಾರಿ ತೋರಿಸಲು ಎ.ಕೆ.ಆಂಟನಿ ನೇತೃತ್ವದ 19 ಸದಸ್ಯರ ಸಮಿತಿಯೊಂದನ್ನು ಸೋನಿಯಾಗಾಂಧಿ ರಚಿಸಿದ್ದರು. ಸಮಿತಿ ಸದಸ್ಯರು ಒಂಬತ್ತು ರಾಜ್ಯಗಳಲ್ಲಿ  ಕಾಲ ಓಡಾಡಿ ಅಭಿಪ್ರಾಯ ಸಂಗ್ರಹಿಸಿದ್ದರು. 40 ದಿನಗಳ ಅಧ್ಯಯನದ ನಂತರ ಆಂಟನಿ ಸಮಿತಿ 200 ಪುಟಗಳ ವರದಿಯನ್ನು ಪಕ್ಷದ ಅಧ್ಯಕ್ಷರಿಗೆ ಸಲ್ಲಿಸಿದ್ದರು. ಈ ವರದಿಯನ್ನು ಗೌಪ್ಯವಾಗಿಡುವ ಉದ್ದೇಶದಿಂದ ಅದರ ಒಂದು ಪ್ರತಿಯನ್ನು ಮಾತ್ರ ಮಾಡಲಾಗಿತ್ತಂತೆ. (ಯಾಕೆ ಈ ರಹಸ್ಯವೊ ಗೊತ್ತಿಲ್ಲ) ಸೋನಿಯಾಗಾಂಧಿ ಮತ್ತು ಕೆಲವು ಆಪ್ತರನ್ನು ಹೊರತುಪಡಿಸಿದರೆ ಅದನ್ನು ನೋಡಿದವರೂ ಇಲ್ಲ. ದೆಹಲಿಯಲ್ಲಿರುವಾಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರೊಬ್ಬರ ಕೈಯಲ್ಲಿದ್ದ ವರದಿ ಮೇಲೆ ಕಣ್ಣಾಡಿಸಿದ್ದ ನನ್ನ ನೆನಪಿನ ಪ್ರಕಾರ ಅದರ ಕೆಲವು ಮುಖ್ಯಾಂಶಗಳು ಹೀಗಿವೆ:
-ಚುನಾವಣೆಗೆ ಅಭ್ಯರ್ಥಿಗಳನ್ನು ಮೂರು ತಿಂಗಳ ಮೊದಲೇ ಆಯ್ಕೆ ಮಾಡಿ ಪ್ರಚಾರಕ್ಕೆ ಅನುಕೂಲ ಮಾಡಿಕೊಡಬೇಕು.
-ಗೆಲುವಿನ ಅವಕಾಶದ ಖಾತರಿ ಇಲ್ಲದೆ ನಾಯಕರ ಪತ್ನಿ ಇಲ್ಲವೆ ಮಕ್ಕಳಿಗೆ ಟಿಕೆಟ್ ನೀಡಬಾರದು.
-ಪಕ್ಷದ ಜಿಲ್ಲಾಸಮಿತಿಗಳು ಶೇಕಡಾ 75ರಷ್ಟು, ಪ್ರದೇಶ ಕಾಂಗ್ರೆಸ್ ಸಮಿತಿ ಶೇಕಡಾ 20ರಷ್ಟು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶೇಕಡಾ ಐದರಷ್ಟು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
-ಚುನಾವಣೆಯ ಪೂರ್ವದಲ್ಲಿ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಾರದು.
-ಪ್ರಚಾರದಲ್ಲಿ ಅಭಿವೃದ್ಧಿಯ ಚರ್ಚೆಗೆ ಮಹತ್ವ ನೀಡಬೇಕು, ಇದಕ್ಕೆ ಅನುಗುಣವಾಗಿ ಚುನಾವಣಾ ತಂತ್ರವನ್ನು ರೂಪಿಸಬೇಕು
-ಸಾಮಾಜಿಕ ಜಾಲತಾಣಗಳ ಮೂಲಕ ಜನಾಭಿಪ್ರಾಯವನ್ನು ಸಂಗ್ರಹಿಸಬೇಕು.
ಇಂತಹ ಮಾನದಂಡಗಳನ್ನು ಶಿಫಾರಸು ಮಾಡಿದ್ದು ಆಂಟನಿ ಸಮಿತಿಯೊಂದೇ ಅಲ್ಲ, 1998ರಲ್ಲಿ ಪಿ.ಎ.ಸಂಗ್ಮಾ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. 2003ರಲ್ಲಿ ರಾಜಸ್ತಾನ, ಮಧ್ಯಪ್ರದೇಶ ಮತ್ತು ಚತ್ತೀಸ್‌ಗಡ ವಿಧಾನಸಭಾ ಚುನಾವಣೆ ಸೋತಾಗ ಪ್ರಣಬ್ ಮುಖರ್ಜಿ ಅಧ್ಯಕ್ಷತೆಯ ಸಮಿತಿ ವರದಿಯನ್ನು ನೀಡಿತ್ತು. ಮನಮೋಹನ್‌ಸಿಂಗ್, ಕರುಣಾಕರನ್ ಹೀಗೆ ಪಕ್ಷದ ಹಿರಿಯ ನಾಯಕರೆಲ್ಲ ತಲೆಗೊಂದರಂತೆ ಚುನಾವಣಾ ಸೋಲಿನ ಆತ್ಮಾವಲೋಕನ ಮತ್ತು ಮಾನದಂಡಗಳ ಪಾಲನೆ ಬಗ್ಗೆ ವರದಿಗಳನ್ನು ನೀಡಿದ್ದರು. 2012ರಲ್ಲಿ ಉತ್ತರಪ್ರದೇಶ, ಪಂಜಾಬ್, ಗೋವಾ, ಚತ್ತೀಸ್‌ಗಡಗಳಲ್ಲಿ ಪಕ್ಷ ಪರಾಭವಗೊಂಡ ನಂತರ ಆಂಟನಿ ನೇತೃತ್ವದ ಸಮಿತಿ ವರದಿಯನ್ನು ನೀಡಿತ್ತು. ಇವೆಲ್ಲವೂ 1999ರ ಆಂಟನಿ ವರದಿಯ ಮಾದರಿಯಲ್ಲಿಯೇ ಇವೆ. ಗೆಲುವಿನ ಕಾರ್ಯತಂತ್ರ, ಸೋಲಿನ ಆತ್ಮಾವಲೋಕನ, ಮಾನದಂಡ-ನೀತಿ ಸಂಹಿತೆಗಳ ವರದಿಗಳಿಗೇನು ಕಾಂಗ್ರೆಸ್ ಪಕ್ಷದಲ್ಲಿ ಬರ ಇಲ್ಲ.
`ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿಗಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು, ದೆಹಲಿಗೆ ಬರಬಾರದು ...ಇತ್ಯಾದಿ ಬುದ್ದಿಮಾತುಗಳನ್ನು ಆಂಟನಿ ವರದಿಯ ದೂಳು ಕೊಡವಿದ ನಂತರವೇ ರಾಹುಲ್‌ಗಾಂಧಿ ಹೇಳಿರುವುದು. ಇದನ್ನು ಪಾಲಿಸುವವರು ಯಾರು? ಪಾಲಿಸುವಂತೆ ಮಾಡುವವರು ಯಾರು?
ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣಾ ಸಮಿತಿಗಳಲ್ಲದೆ ಹಿರಿಯ ನಾಯಕರ ನೇತೃತ್ವದಲ್ಲಿ ಪ್ರಾಂತೀಯ ಸಮಿತಿಗಳನ್ನು ಕೂಡಾ ರಚಿಸಿತ್ತು. ಜಿಲ್ಲಾ ಸಮಿತಿ ಅಧ್ಯಕ್ಷರು ಒಂದು ಇಲ್ಲವೆ ಎರಡು ಹೆಸರುಗಳನ್ನು ಮಾತ್ರ ಶಿಫಾರಸು ಮಾಡಬೇಕೆಂದು ತಿಳಿಸಲಾಗಿತ್ತು. ಇಷ್ಟೆಲ್ಲ ಕಸರತ್ತಿನ ನಂತರ ನಡೆದದ್ದು ಮಾತ್ರ ಹಳೆಯ ಪ್ರಹಸನದ ಮರುಪ್ರದರ್ಶನ. ಯಥಾಪ್ರಕಾರ ಬೆಂಬಲಿಗರೊಂದಿಗೆ ನಾಯಕರ ದಂಡು ದೆಹಲಿಗೆ ದಾಳಿ ಹಾರಿತು. ಹೋದವರೆಲ್ಲರೂ ತಮ್ಮ ಸಾಮರ್ಥ್ಯಕ್ಕೆ ಎಟುಕಬಲ್ಲ  ನಾಯಕರನ್ನು ಭೇಟಿ ಮಾಡಿದರು. ಒಂದಷ್ಟು ಮಹಿಳಾ ಆಕಾಂಕ್ಷಿಗಳು ಸೋನಿಯಾ ಮನೆ ಮುಂದೆ ಧರಣಿಯನ್ನೂ ಮಾಡಿದರು. ಇಷ್ಟೆಲ್ಲಾ ನಡೆಯುವಾಗ `ದೆಹಲಿಗೆ ಬರಬೇಡಿ' ಎಂಬ ಆದೇಶ ನೀಡಿದ್ದ ರಾಹುಲ್‌ಗಾಂಧಿ ಎಲ್ಲಿದ್ದರು? ತಮ್ಮ ಆದೇಶ ಉಲ್ಲಂಘಿಸಿದ್ದ ನಾಲ್ಕು ನಾಯಕರಿಗೆ ಟಿಕೆಟ್ ನಿರಾಕರಿಸುವ ಶಿಸ್ತುಕ್ರಮಕೈಗೊಂಡಿದ್ದರೆ ಉಳಿದವರು ಕರ್ನಾಟಕಕ್ಕೆ ಓಡಿಬರುತ್ತಿದ್ದರು. ಇದನ್ನೆಲ್ಲ ನೋಡಿದ ಟಿಕೆಟ್ ವಂಚಿತ ಯುವ ಅಭ್ಯರ್ಥಿಯೊಬ್ಬ `ನಮ್ಮ ನಾಯಕರ ಮಾತು ಕೇಳಿ ದೆಹಲಿಗೆ ಹೋಗದೆ ಇಲ್ಲಿಯೇ ಇದ್ದು ತಪ್ಪು ಮಾಡಿದೆ. ನನ್ನನ್ನು ವಿರೋಧಿಸಿ ಅಲ್ಲಿಗೆ ಹೋದವರೆಲ್ಲರೂ ಸಂಚು ಮಾಡಿ ಟಿಕೆಟ್ ತಪ್ಪಿಸಿದರು' ಎಂದು ಗೋಳಾಡುತ್ತಿದ್ದ.
2008ರಲ್ಲಿ ಸತತ ಎರಡನೆ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋತಾಗ ಪಕ್ಷದ ಹೈಕಮಾಂಡ್ ಚಿಂತಾಕ್ರಾಂತವಾಗಿತ್ತು. ಆಗಲೂ ಸೋಲಿನ ಕಾರಣಗಳನ್ನು ಹುಡುಕಲು ಎ.ಕೆ.ಆಂಟನಿ ನೇತೃತ್ವದಲ್ಲಿಯೇ ಸಮಿತಿ ರಚಿಸಲಾಗಿತ್ತು. ಬೆಳಕಿಗೆ ಬಾರದ ಈ ವರದಿಯಲ್ಲಿಯೂ `ಕಾಂಗ್ರೆಸ್ ಸೋಲಿಗೆ ಆಂತರಿಕ ಕಚ್ಚಾಟ ಮತ್ತು ಹಿರಿಯ ನಾಯಕರು ಸ್ವಂತ ಕ್ಷೇತ್ರಗಳಲ್ಲಿ ಗೆಲ್ಲಲು ವಿಫಲವಾಗಿದ್ದು ಕಾರಣ' ಎಂಬ ಅಂಶ ಪ್ರಮುಖವಾಗಿ ಉಲ್ಲೇಖವಾಗಿತ್ತಂತೆ. `ಕಾಂಗ್ರೆಸ್ ಸೋಲಿಗೆ ಕಾಂಗ್ರೆಸಿನವರೇ ಸಾಕು, ವಿರೋಧಪಕ್ಷಗಳು ಬೇಕಿಲ್ಲ' ಎನ್ನುವ ವ್ಯಂಗ್ಯೋಕ್ತಿ ರಾಜ್ಯದ ರಾಜಕಾರಣದಲ್ಲಿ ಪ್ರಚಾರದಲ್ಲಿದೆ. ಇದನ್ನು ಸುಳ್ಳೆಂದು ಕಾಂಗ್ರೆಸಿನವರೇ ಹೇಳುವುದಿಲ್ಲ. ಕಳೆದ ವರ್ಷ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಈ ಮಾತನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದರು. 2008ರ ಚುನಾವಣಾ ಕಾಲದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಖರ್ಗೆ ಅವರು ಬಹಿರಂಗವಾಗಿ ಹೇಳಲಾಗದ ಇನ್ನಷ್ಟು ಸತ್ಯಗಳನ್ನು ಬಚ್ಚಿಟ್ಟುಕೊಂಡಿರಬಹುದು.
2008ರ ಕಾಂಗ್ರೆಸ್ ಪಕ್ಷದ ಸೋಲಿಗೆ ದಲಿತ ನಾಯಕನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪರೋಕ್ಷವಾಗಿ ಬಿಂಬಿಸಿದ್ದೂ ಕಾರಣ ಎಂದು ಇಂದಿಗೂ ಹೇಳುವವರಿದ್ದಾರೆ. ಆದರೆ ಆಂಟನಿ ಸಮಿತಿ ಎತ್ತಿರುವ ಪ್ರಶ್ನೆಗಳಿಗೆ ಯಾರೂ ಉತ್ತರ ನೀಡುವುದಿಲ್ಲ. ಕಳೆದ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿದ್ದ 34 ಮಾಜಿ ಸಚಿವರು ಸೋಲು ಅನುಭವಿಸಿದ್ದರು ಎನ್ನುವುದನ್ನು ಬಹಳ ಮಂದಿ ಮರೆತೇ ಬಿಟ್ಟಿದ್ದಾರೆ. ಸೋಲಿನ ಸರದಾರರ ಪಟ್ಟಿಯಲ್ಲಿ ಎನ್.ಧರ್ಮಸಿಂಗ್, ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಎಚ್.ವಿಶ್ವನಾಥ್, ಅಂಬರೀಷ್, ಎಚ್.ಸಿ.ಶ್ರಿಕಂಠಯ್ಯ, ಡಿ.ಬಿ.ಚಂದ್ರೇಗೌಡ, ಎಂ.ಪಿ.ಪ್ರಕಾಶ್, ಕಾಗೋಡು ತಿಮ್ಮಪ್ಪ, ವಸಂತ್ ವಿ.ಸಾಲ್ಯಾನ್,ಎಂ.ವೈ ಮೇಟಿ, ಕೆ.ಬಿ.ಕೋಳಿವಾಡ್, ಶ್ರಿನಿವಾಸಗೌಡ ಮೊದಲಾದವರ ಹೆಸರುಗಳಿವೆ. ಇವರಲ್ಲಿ ಒಂದಷ್ಟು ಮಂದಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳೂ ಆಗಿದ್ದರು. ಇವರಲ್ಲಿ ಹತ್ತು ನಾಯಕರು ಗೆದ್ದುಬಿಟ್ಟಿದ್ದರೂ ರಾಜ್ಯದ ರಾಜಕೀಯ ಚಿತ್ರವೇ ಬದಲಾಗಿರುತ್ತಿತ್ತು. ಬೇರೆ ಕ್ಷೇತ್ರಗಳಿಗೆ ಹೋಗಿ ಪ್ರಚಾರಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದ್ದ ಈ ನಾಯಕರನ್ನು ಅವರ ಕ್ಷೇತ್ರಗಳಲ್ಲಿ ಗೆಲ್ಲಿಸಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪ್ರಚಾರಕ್ಕೆ ಹೋಗಬೇಕಿತ್ತೇ? ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ `ಕಾಲೆಳೆಯುವ ರಾಜಕಾರಣ' ಕೂಡಾ ಕಾರಣ ಎನ್ನುವುದನ್ನು ಆಂಟನಿ ಗುರುತಿಸಿದ್ದಾರೆ. ಹಲವಾರು ನಾಯಕರು ಪಕ್ಷದಲ್ಲಿರುವ ತಮ್ಮ ವಿರೋಧಿಗಳನ್ನು ಸೋಲಿಸಲು ವಿರೋಧಪಕ್ಷಗಳ ಅಭ್ಯರ್ಥಿಗೆ ಹಣಕಾಸು ನೆರವು ನೀಡಿದ್ದ ಪ್ರಕರಣಗಳನ್ನು ಕೂಡಾ ಪಕ್ಷದ ಹಿರಿಯ ನಾಯಕರು ಆಂಟನಿ ಅವರ ಗಮನಕ್ಕೆ ತಂದಿದ್ದರು. ಆದರೆ ಯಾರ ತಲೆಯೂ ಉರುಳಲಿಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಹಾಕಿದ ಆರೋಪ ಹೊತ್ತವರಿಗೆ ಟಿಕೆಟ್ ನೀಡಿದ ನಂತರ ಯಾವ ತಲೆ ಉರುಳಲು ಸಾಧ್ಯ?
ತಾನು ಕನಸು ಕಾಣುತ್ತಿರುವ ಆದರ್ಶ ರಾಜಕಾರಣವನ್ನು ಕಾರ್ಯರೂಪಕ್ಕೆ ತರಲು ರಾಹುಲ್‌ಗಾಂಧಿ ಈ ಬಾರಿ ಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಬಹುದಿತ್ತು. ಅಂತಹದ್ದೊಂದು ಅಪೂರ್ವ ಅವಕಾಶ ಕೂಡಿ ಬಂದಿತ್ತು. ಇತ್ತೀಚಿನ ಎಲ್ಲ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಬಹುಮತ ಗಳಿಸಬಹುದೆಂಬ ಭವಿಷ್ಯ ನುಡಿಯುತ್ತಿವೆ.  `ರಾಜಕೀಯ ಆತ್ಮಹತ್ಯೆ' ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ಪಕ್ಷವೊಂದು `ರಿಸ್ಕ್'ತೆಗೆದುಕೊಳ್ಳಲು ಸಾಧ್ಯವಾಗುವುದೇ ಇಂತಹ ಅನುಕೂಲಕರ ಪರಿಸ್ಥಿತಿಯಲ್ಲಿ. ಅಷ್ಟೇನು ಜನಪ್ರಿಯರಲ್ಲದ, ಜಾತಿ ಮತ್ತು ದುಡ್ಡಿನ ಬಲ ಇಲ್ಲದ, ಸಜ್ಜನ, ಪ್ರಾಮಾಣಿಕ, ಕಳಂಕರಹಿತ ಮತ್ತು ಸೇವಾಸಕ್ತ ವ್ಯಕ್ತಿಗಳನ್ನು ಗುರುತಿಸಿ ಟಿಕೆಟ್‌ನೀಡಲು ಇದೊಂದು ಅವಕಾಶ. ಪಕ್ಷದ ಜನಪ್ರಿಯತೆಯ ಅಲೆಯ ಮೇಲೇರಿ ಇಂತಹವರು ಗೆಲುವಿನ ದಡ ಸೇರುವ ಸಾಧ್ಯತೆ ಇರುತ್ತದೆ. ಮುಳುಗುತ್ತಿರುವ ಹಡಗಿನಂತಾಗಿರುವ ಬಿಜೆಪಿ ಇಂತಹ ದಿಟ್ಟತನದ ರಾಜಕೀಯ ನಿರ್ಧಾರವನ್ನು ತೋರಿಸುವ ಸ್ಥಿತಿಯಲ್ಲಿ ಇಲ್ಲ.  ಆದರೆ ಈಗಾಗಲೇ ಬಿಡುಗಡೆಗೊಂಡಿರುವ ಅಭ್ಯರ್ಥಿಗಳ ಪಟ್ಟಿ ಮತ್ತು ಅದರ ಬೆನ್ನಲ್ಲಿಯೇ ಎದ್ದಿರುವ ವಿವಾದಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷ ರಾಹುಲ್‌ಗಾಂಧಿ ತೋರುತ್ತಿರುವ ದಾರಿಯನ್ನು ಬಿಟ್ಟು ಹಳೆಯ ದಾರಿಯಲ್ಲಿಯೇ ಸಾಗುವ ಹಾಗೆ ಕಾಣುತ್ತಿದೆ. ಇಷ್ಟೆಲ್ಲ ಅವಾಂತರಗಳ ನಂತರವೂ ಕಾಂಗ್ರೆಸ್ ಪಕ್ಷವೇ ಚುನಾವಣೆಯಲ್ಲಿ ಬಹುಮತ ಗಳಿಸಬಹುದು, ಆ ಪಕ್ಷವೇ ಸರ್ಕಾರ ರಚಿಸಬಹುದು. ಆದರೆ ಪಕ್ಷ ಗೆದ್ದರೂ ಕೂಡ ಪ್ರಧಾನಮಂತ್ರಿಯಾಗಲು ಹೊರಟ ರಾಹುಲ್‌ಗಾಂಧಿಯ ಆದರ್ಶದ ಸೋಲು ಆಗಲಿದೆ.