Monday, June 20, 2011

ಜನಲೋಕಪಾಲ ಸರ್ವರೋಗಕ್ಕೆ ಪರಿಹಾರವೇ?

ಭಾರತದಲ್ಲಿ ಸಂಸದೀಯ ಪ್ರಜಾಪ್ರಭುತ್ವ ವಿಫಲಗೊಂಡಿದೆ ಎಂದು ಇಲ್ಲಿಯವರೆಗೆ `ಕಾಡಿನವರು~ ಮಾತ್ರ ಹೇಳುತ್ತಿದ್ದರು, ಈಗ `ನಾಡಿನವರು~ ಕೂಡಾ ಹೇಳತೊಡಗಿದ್ದಾರೆ.
ಹದಿನಾಲ್ಕು ರಾಜ್ಯಗಳಲ್ಲಿ ಹಾದುಹೋಗಿರುವ ಮತ್ತು ದೇಶದ ಶೇಕಡಾ 40ರಷ್ಟು ಪ್ರದೇಶದಲ್ಲಿ ವ್ಯಾಪಿಸಿರುವ `ರೆಡ್ ಕಾರಿಡಾರ್~ನಲ್ಲಿ `ಕಾಡಿನವರ ಸರ್ಕಾರ~ ಇದೆ.
ಅಲ್ಲಿರುವ ದೇಶದ ಶೇಕಡಾ 35ರಷ್ಟು ಜನ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ.
ತಲೆಮಾರುಗಳಿಂದ ಅಭಿವೃದ್ಧಿ ವಂಚಿತರಾಗಿರುವ ಈ ಶೋಷಿತ ಜನಸಮುದಾಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದರೆ ಅದು ಸಹಜ. ಆಶ್ಚರ‌್ಯವೆಂದರೆ  ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡು ಚುನಾವಣೆಯಲ್ಲಿ ಮತಚಲಾಯಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಿರುವ ಮತ್ತು ಅವರಿಂದ ಆಯ್ಕೆಗೊಂಡಿರುವ `ನಾಡಿನವರು~ ಕೂಡಾ `ಕಾಡಿನವರ~ ಭಾಷೆಯಲ್ಲಿಯೇ ಮಾತನಾಡುತ್ತಿರುವುದು.
ಇದಕ್ಕೆ ಇತ್ತೀಚಿನ ಉದಾಹರಣೆ- ಸಂವಿಧಾನದ ಪ್ರಮುಖ ಅಂಗವಾಗಿರುವ ನ್ಯಾಯಾಂಗದ ಮೇಲೆ ನಂಬಿಕೆ ಕಳೆದುಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ದೇವರ ಮೇಲೆ ಆಣೆ ಮಾಡಲು ಹೊರಟಿರುವುದು.
ಅಲ್ಲಿಗೆ ಕಳೆದ 60 ವರ್ಷಗಳಿಂದ ನಾವು ಒಪ್ಪಿಕೊಂಡಿರುವ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ರೋಗಗ್ರಸ್ತವಾಗಿದೆ ಎಂದು ಬಹು ಸಂಖ್ಯಾತ ಜನ ಒಪ್ಪಿಕೊಂಡಂತಾಯಿತು. ಆ ಬಗ್ಗೆ ವಿವಾದಗಳಿಲ್ಲ. ವಿವಾದ ಇರುವುದು ಇದಕ್ಕೆ ನೀಡಬೇಕಾದ ಚಿಕಿತ್ಸೆ ಬಗ್ಗೆ.
ಕಾಡಿನಲ್ಲಿರುವ ಮಾವೋವಾದಿಗಳ ಪ್ರಕಾರ ಇದು ಚಿಕಿತ್ಸೆ ಮೀರಿದ ರೋಗ. `ಈಗಿನ ವ್ಯವಸ್ಥೆಯನ್ನು ನಾಶಮಾಡಿದರೆ ಮಾತ್ರ ಹೊಸ ವ್ಯವಸ್ಥೆ ಹುಟ್ಟಲು ಸಾಧ್ಯ. ಅದನ್ನೇ ನಾವು ಬಂದೂಕಿನ ಮೂಲಕ ಮಾಡಲು ಹೊರಟಿದ್ದೇವೆ~ ಎನ್ನುತ್ತಾರೆ ಅವರು.

ಇದನ್ನು ಕಾಂಗ್ರೆಸಿಗರು, ಮಾರ್ಕ್ಸಿಸ್ಟರು, ಸೋಷಿಯಲಿಸ್ಟರು, ಉದಾರವಾದಿಗಳು, ಸಂಪ್ರದಾಯವಾದಿಗಳು ಮಾತ್ರವಲ್ಲ, ಬಹು ಸಂಖ್ಯೆಯ ಜನಸಮುದಾಯ ಕೂಡಾ ಒಪ್ಪುವುದಿಲ್ಲ. ಹಾಗಿದ್ದರೆ ಇದಕ್ಕೇನು ಚಿಕಿತ್ಸೆ? ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಜನಪ್ರಿಯ ಔಷಧಿಯ ಹೆಸರು `ಲೋಕಪಾಲ ಮಸೂದೆ~.
ಇದು ಸರ್ವರೋಗ ನಿವಾರಕ ಎಂದು ಅದರ ತಯಾರಕರು ಹೇಳಿಕೊಳ್ಳದಿದ್ದರೂ ಹಾಗೆಂದು ಅದರ ಬೆಂಬಲಿಗರು ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಪ್ರಚಾರದಿಂದಾಗಿ ಜನತೆಯಲ್ಲಿನ ನಿರೀಕ್ಷೆ ಕೂಡಾ ಆಕಾಶದೆತ್ತರಕ್ಕೆ ಏರಿದೆ.
ಒಂದೊಮ್ಮೆ ನಾಗರಿಕ ಸಮಿತಿ ರಚಿಸಿರುವ ಜನಲೋಕಪಾಲ ಮಸೂದೆಯನ್ನು ಯಥಾವತ್ತಾಗಿ ಸಂಸತ್ ಅಂಗೀಕರಿಸಿ ಕಾನೂನಿನ ರೂಪ ನೀಡಿದರೆ ಸಾರ್ವಜನಿಕ ಜೀವನದಲ್ಲಿನ ಭ್ರಷ್ಟಾಚಾರದ ಮೂಲೋತ್ಪಾಟನೆಯಾಗುವುದೇ? ಪ್ರಜಾಪ್ರಭುತ್ವಕ್ಕೆ ತಗಲಿರುವ ರೋಗ ವಾಸಿಯಾಗುವುದೇ? ಈ ಬಗ್ಗೆ ಅನುಮಾನಿಸುವುದಕ್ಕೆ ಕಾರಣಗಳಿವೆ.
ಮೊದಲನೆಯದಾಗಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ಕೂರುತ್ತೇನೆಂದು ಹೇಳಿದ ದಿನದಿಂದ ಇಲ್ಲಿಯವರೆಗೆ ನಡೆಯುತ್ತಿರುವ ಚರ್ಚೆಯೆಲ್ಲವೂ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಸುತ್ತಲೇ ಗಿರ್ಕಿ ಹೊಡೆಯುತ್ತಿದೆ. ಬಹುಮುಖ್ಯವಾದ ಎರಡು ಕ್ಷೇತ್ರಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಯಾಕೋ ಚರ್ಚೆ ನಡೆಯುತ್ತಿಲ್ಲ.

ಈ ಎರಡರಲ್ಲಿ ಮೊದಲನೆಯದು ಕಾರ್ಪೋರೇಟ್ ಕ್ಷೇತ್ರ, ಎರಡನೆಯದು ಧಾರ್ಮಿಕ ಕ್ಷೇತ್ರ. ನಮ್ಮೆಲ್ಲ ಚರ್ಚೆ ನಡೆಯುತ್ತಿರುವುದು ಲಂಚ ಸ್ವೀಕರಿಸುತ್ತಿರುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಬಗ್ಗೆ. ಇವರಿಬ್ಬರಿಗೂ ಲಂಚ ಸ್ವೀಕರಿಸಿಯಷ್ಟೇ ಗೊತ್ತು ವಿನಾ ಲಂಚ ಕೊಟ್ಟು ಗೊತ್ತಿಲ್ಲ. ಆದರೆ  ಇವರಿಗೆ ಲಂಚ ಕೊಡುವವರು ಯಾರು ಮತ್ತು ಅವರು ಯಾಕೆ ಕೊಡುತ್ತಿದ್ದಾರೆ? ಯಾರೂ ಕೇಳುತ್ತಿಲ್ಲ.
ನೈತಿಕ ದೃಷ್ಟಿಯಿಂದ ಲಂಚ ಸ್ವೀಕರಿಸಿದ್ದಕ್ಕಿಂತ ಲಂಚ ಕೊಡುವುದು ಸ್ವಲ್ಪ ಸಣ್ಣ ಪ್ರಮಾಣದ ಅಪರಾಧವಾಗಿರಬಹುದು. ಆದರೆ ಅದರ ಪರಿಣಾಮ? ಸಚಿವರು ಮತ್ತು ಉನ್ನತಾಧಿಕಾರಿಗಳ ಮಟ್ಟದಲ್ಲಿ ಲಂಚ ನೀಡುವವನು ಹಳ್ಳಿಯ ಬಡಬೋರೇಗೌಡ ಅಲ್ಲ, ಅವನು ಖಂಡಿತವಾಗಿಯೂ ಒಬ್ಬ ಉದ್ಯಮಿಯಾಗಿರುತ್ತಾನೆ.
ಇಲ್ಲಿಯವರೆಗೆ ಬಯಲಾಗಿರುವ ಯಾವ ಹಗರಣವನ್ನು ತೆಗೆದುಕೊಂಡರೂ ಅದರಲ್ಲಿ ಉದ್ಯಮಿಗಳ ಪ್ರಮುಖ ಪಾತ್ರವನ್ನು ಕಾಣಬಹುದು. ಒಬ್ಬ ಉದ್ಯಮಿ ಹತ್ತುಕೋಟಿ ರೂಪಾಯಿ ಲಂಚ ನೀಡಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟುಮಾಡುವಂತಹ ಅಕ್ರಮ ವ್ಯವಹಾರ ನಡೆಸಿ ಸಾವಿರಾರು ಕೋಟಿ ರೂಪಾಯಿ ಲಾಭ ಪಡೆದಿರುತ್ತಾನೆ.
ಇದಕ್ಕೆ ಉತ್ತಮ ಉದಾಹರಣೆ 2ಜಿ ತರಂಗಾಂತರ ಹಗರಣ. ಇದರಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಅಧಿಕಾರಿಗಳು ಅತ್ಯಧಿಕವೆಂದರೆ  ಒಂದೆರಡು ಸಾವಿರಕೋಟಿ ಲಂಚ ಪಡೆದಿರಬಹುದು, ಆದರೆ ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟ ಅಂದಾಜು 1.76 ಲಕ್ಷ ಕೋಟಿ ರೂಪಾಯಿ ಅಲ್ಲವೇ? ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿರುವ, ಬ್ಯಾಂಕ್ ಸಾಲ ಮುಳುಗಿಸಿರುವ, ಲಂಚ ಕೊಟ್ಟು ಸರ್ಕಾರದ ನೀತಿಗಳನ್ನೇ ಬದಲಾಯಿಸಿರುವ ಆರೋಪ ಹೊತ್ತ ನೂರಾರು ಉದ್ಯಮಿಗಳು ನಮ್ಮ ನಡುವೆ ಇದ್ದಾರೆ.
ಬಹಳಷ್ಟು ಉದ್ಯಮಿಗಳು ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲವನ್ನು ಮಾತ್ರವಲ್ಲ, ದೇಣಿಗೆಯನ್ನೂ ನೀಡಿದ್ದಾರೆ. ಅಣ್ಣಾ ಹಜಾರೆ ಅವರ ಸತ್ಯಾಗ್ರಹಕ್ಕಾಗಿ ಸಂಗ್ರಹ ಮಾಡಿದ ಹಣದ ಮೊತ್ತ 82.88 ಲಕ್ಷ ರೂಪಾಯಿ, ಅದರಲ್ಲಿ ಉದ್ಯಮಿಗಳಿಂದ ಸಂಗ್ರಹವಾದ ದೇಣಿಗೆಯ ಒಟ್ಟು ಮೊತ್ತ 46.50 ಲಕ್ಷ ರೂಪಾಯಿ.ಅಂದರೆ ಸತ್ಯಾಗ್ರಹಕ್ಕೆ ಖರ್ಚಾದ ಹಣದಲ್ಲಿ ಅರ್ಧಕ್ಕಿಂತಲೂ ಹೆಚ್ಚಿನ ಹಣ ನೀಡಿದವರು ಉದ್ಯಮಿಗಳು.

ಭ್ರಷ್ಟಾಚಾರದ ವಿರುದ್ಧದ ಹೋರಾಟದ ಗಮನವನ್ನು ಸಂಪೂರ್ಣವಾಗಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ಕಡೆ ಕೇಂದ್ರೀಕರಿಸಿ ತಮ್ಮ ಕಡೆ ಯಾರೂ ಕಣ್ಣು ಹಾಯಿಸದಂತೆ ಮಾಡುವುದು ಇದರ ಹಿಂದಿನ ಹುನ್ನಾರವೇ?
ಚರ್ಚೆಯಾಗದೆ ಉಳಿದಿರುವ ಎರಡನೇ ಕ್ಷೇತ್ರ ಧಾರ್ಮಿಕ ಕೇಂದ್ರಗಳದ್ದು. ಕಳೆದೆರಡು ದಿನಗಳಲ್ಲಿ ದಿವಂಗತ ಸತ್ಯಸಾಯಿ ಬಾಬಾ ಅವರ ಖಾಸಗಿ ಕೋಣೆಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಹಾಗೂ ನಗದು ಹಣ ಪತ್ತೆಯಾಗಿರುವುದೇ ದೊಡ್ಡ ಸುದ್ದಿ. ಇವೆಲ್ಲವೂ ಅಕ್ರಮವಾಗಿ ಕೂಡಿಟ್ಟದ್ದಲ್ಲವೇ?
ಸಂಬಳಕ್ಕೆ ದುಡಿಯುವ ಒಬ್ಬ ಸಾಮಾನ್ಯ ನೌಕರ ತನ್ನ ಗಳಿಕೆಯ ಮೂರನೇ ಒಂದರಷ್ಟು ಭಾಗವನ್ನು ವರಮಾನ ತೆರಿಗೆಯಾಗಿ ಪಾವತಿಸದಿದ್ದರೆ ನೋಟಿಸ್ ನೀಡುವ ವರಮಾನ ತೆರಿಗೆ ಇಲಾಖೆಯ ಕಣ್ಣಿಗೆ ಸಾಯಿಬಾಬಾ ಅವರಲ್ಲಿದ್ದ ಅಕ್ರಮ ಗಳಿಕೆ ಕಣ್ಣಿಗೆ ಬಿದ್ದಿರಲಿಲ್ಲವೇ?
ದೇಶದ ಪ್ರಧಾನಿಯಿಂದ ಹಿಡಿದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರೆಗೆ ಎಲ್ಲರನ್ನೂ ಭಕ್ತರಾಗಿ ಹೊಂದಿರುವ ಸಾಯಿಬಾಬಾ ಅವರನ್ನು ಮುಟ್ಟುವ ಧೈರ‌್ಯವಾದರೂ ಅವರಿಗೆಲ್ಲಿಂದ ಬರಬೇಕಿತ್ತು?
ಇದು ಸಾಯಿಬಾಬಾ ಒಬ್ಬರ ಕತೆಯಲ್ಲ, ನಮ್ಮ ಅನೇಕ `ದೇವ ಮಾನವರ~ ಕಪಾಟುಗಳಲ್ಲಿಯೂ `ಅಸ್ಥಿಪಂಜರ~ಗಳಿರುವ ಗುಮಾನಿ ಇದೆ. ಸರಿಯಾಗಿ ತನಿಖೆ ನಡೆಸಿದರೆ ನಮ್ಮ ಬಹುತೇಕ ಧಾರ್ಮಿಕ ಕೇಂದ್ರಗಳಲ್ಲಿಯೂ ಈ ರೀತಿಯ ಅಕ್ರಮ ಸಂಪತ್ತು ಸಂಗ್ರಹ ಬಯಲಾಗಬಹುದು.
ರಾಜಕಾರಣಿಗಳು ಕೂಡಾ ತಮ್ಮ ಅಕ್ರಮ ಗಳಿಕೆಯನ್ನು ಬಚ್ಚಿಡಲು ಮಠ-ಮಂದಿರಗಳೇ ಸುರಕ್ಷಿತ ಸ್ಥಳ ಎಂದು ಕಂಡುಕೊಂಡಿದ್ದಾರೆ. ಬಹಳಷ್ಟು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಧಿ ದಕ್ಷಿಣದ ಒಂದು ಪ್ರಸಿದ್ಧ ಮಠದಲ್ಲಿತ್ತಂತೆ.

ರಾಜ್ಯದ ಇನ್ನೊಬ್ಬ ಹಿರಿಯ ರಾಜಕಾರಣಿ ಮತ್ತು ಅವರ ಜಾತಿಯ ಮಠದ ಸ್ವಾಮೀಜಿಗಳ ನಡುವಿನ ಜಗಳಕ್ಕೂ ಅಕ್ರಮವಾಗಿ ಕೂಡಿಟ್ಟಿರುವ ಹಣವೇ ಕಾರಣ ಎಂದು ಬಲ್ಲವರು ಹೇಳುತ್ತಾರೆ.

ಮಠ-ಮಂದಿರಗಳಿಗೆ ಬಹಳಷ್ಟು ಸಮೀಪ ಇರುವ ರಾಜ್ಯ ಈಗಿನ ಆಡಳಿತಾರೂಢ ಪಕ್ಷದ ನಾಯಕರ ಮೇಲೂ ಇಂತಹದ್ದೇ ಆರೋಪಗಳಿವೆ. ಇದು ಕೇವಲ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸೀಮಿತವಾಗಿಲ್ಲ.
ಮಸೀದಿ ಮತ್ತು ಚರ್ಚುಗಳಿಗೆ ವಿದೇಶದಿಂದ ಹೇರಳವಾಗಿ ಬರುವ ಹಣಕ್ಕೆ ಸಂಬಂಧಿಸಿದಂತೆಯೂ ಅಕ್ರಮ ಸಂಗ್ರಹದ ಆರೋಪ ಇದೆ. ಲೋಕಪಾಲ ಮಸೂದೆ ಬಗ್ಗೆ ಚರ್ಚೆ ನಡೆಸುವಾಗ ಸರ್ಕಾರ ಮತ್ತು ನಾಗರಿಕ ಸಮಿತಿ ಕೂಡಿಯೇ ಧಾರ್ಮಿಕ ಕ್ಷೇತ್ರಕ್ಕೆ ವಿನಾಯಿತಿ ನೀಡಿದಂತಿದೆ.
ಜನಲೋಕಪಾಲ ಮಸೂದೆಯ ಬಗ್ಗೆ ಇರುವ ಇನ್ನೊಂದು ಸಾಮಾನ್ಯ ಭಿನ್ನಾಭಿಪ್ರಾಯ -ಅದು ಕೇಳುತ್ತಿರುವ `ಸರ್ವಾಧಿಕಾರ~ದ ಬಗ್ಗೆ.
ಪ್ರಧಾನ ಮಂತ್ರಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ತನ್ನ ವ್ಯಾಪ್ತಿಗೆ ಒಳಪಡಿಸಬೇಕು. ಇದರ ಜತೆಯಲ್ಲಿ ಸಂಸತ್‌ನೊಳಗಿನ ಸಂಸದರ ನಡವಳಿಕೆಯನ್ನು ಕೂಡಾ ತನಿಖೆ ಮಾಡುವಂತಹ ಅಧಿಕಾರ ಇರಬೇಕು, ಕೇಂದ್ರ ತನಿಖಾದಳ (ಸಿಬಿಐ) ಮತ್ತು ಕೇಂದ್ರ ಜಾಗೃತ ಆಯೋಗಗಳನ್ನು (ಸಿವಿಸಿ) ಕೂಡಾ ತನ್ನ ಅಧೀನಕ್ಕೆ ಒಪ್ಪಿಸಬೇಕು...ಹೀಗೆ ಎಲ್ಲ ಅಧಿಕಾರವನ್ನು ಲೋಕಪಾಲರಿಗೆ ನೀಡಬೇಕು ಎಂದು ನಾಗರಿಕ ಸಮಿತಿ ಕೇಳುತ್ತಿದೆ.
ಪ್ರಜಾಪ್ರಭುತ್ವದ ಮೂಲ ಸಿದ್ಧಾಂತ ಅಧಿಕಾರ ವಿಕೇಂದ್ರೀಕರಣವೇ ಹೊರತು ಕೇಂದ್ರೀಕರಣ ಅಲ್ಲ. ಯಾವುದೇ ವ್ಯಕ್ತಿ ಇಲ್ಲವೇ ಸಂಸ್ಥೆಯಲ್ಲಿ ಅಧಿಕಾರ ಕೇಂದ್ರೀಕರಣವಾಗಬಾರದು ಎಂದು ಹೇಳುತ್ತದೆ ಪ್ರಜಾಪ್ರಭುತ್ವ. ಇದು ಸಂವಿಧಾನದ ಆಶಯ ಕೂಡಾ ಹೌದು.
ಎಲ್ಲವನ್ನೂ ಲೋಕಪಾಲರ ಸುಪರ್ದಿಗೆ ಒಪ್ಪಿಸುವುದರ ಬದಲಿಗೆ ಇದ್ದ ಜಾಗದಲ್ಲಿಯೇ ಅವುಗಳು ಇನ್ನಷ್ಟು ಸ್ವತಂತ್ರವಾಗಿ ಮತ್ತು ಕ್ಷಮತೆಯಿಂದ ಕಾರ‌್ಯನಿರ್ವಹಿಸುವಂತೆ ಮಾಡಬೇಕಾಗಿದೆ. ಇದಕ್ಕಾಗಿ ಬೇರೇನೂ ಮಾಡಬೇಕಾಗಿಲ್ಲ.
ಸರ್ಕಾರಿಯಾ ಆಯೋಗ, ರಾಷ್ಟ್ರೀಯ ಸಂವಿಧಾನ ಕಾರ‌್ಯನಿರ್ವಹಣೆಯ ಪುನರ್‌ಪರಿಶೀಲನಾ ಆಯೋಗ ಮತ್ತು ಚುನಾವಣಾ ಆಯೋಗದ ಶಿಫಾರಸುಗಳು ಮತ್ತು ಕಾಲಕಾಲಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳನ್ನು ಜಾರಿಗೆ ತಂದರೆ ಸಾಕು.
ಇವುಗಳಲ್ಲಿ ಅತೀ ತುರ್ತಾಗಿ ನಡೆಯಬೇಕಾಗಿರುವುದು ಚುನಾವಣಾ ಸುಧಾರಣೆ. ಪ್ರಾಮಾಣಿಕರು, ಸಜ್ಜನರು, ಜನಪರ ಕಾಳಜಿ ಉಳ್ಳವರು ಚುನಾವಣಾ ರಾಜಕೀಯಕ್ಕೆ ಇಳಿಯಲಾಗದ ಸ್ಥಿತಿಯೇ ಭಾರತದ ಸಂಸದೀಯ ಪ್ರಜಾಪ್ರಭುತ್ವಕ್ಕೆ ತಗಲಿರುವ ರೋಗಕ್ಕೆ ಮೂಲ ಕಾರಣ.
ಕ್ರಿಮಿನಲ್ ಹಿನ್ನೆಲೆಯ 150 ಸದಸ್ಯರು ಮತ್ತು 300 ಕೋಟ್ಯಧಿಪತಿ ಸದಸ್ಯರನ್ನೊಳಗೊಂಡ ಈಗಿನ ಲೋಕಸಭೆ ತಮ್ಮ ಕೊರಳಿಗೆ ಉರುಳಾಗಲಿರುವ ಲೋಕಪಾಲ ಮಸೂದೆಗೆ ಕಣ್ಣುಮುಚ್ಚಿ ಅಂಗೀಕಾರ ನೀಡಬಹುದೆಂದು ತಿಳಿದುಕೊಂಡವರು ಮೂರ್ಖರು ಅಷ್ಟೆ.

ಇದು ಗೊತ್ತಿದ್ದೂ  ಉಪವಾಸ ಸತ್ಯಾಗ್ರಹದ ಮೂಲಕ ಏಕಾಏಕಿ ಸರ್ಕಾರವನ್ನು ಮಣಿಸುತ್ತೇವೆಂದು ಹೊರಡುವುದು ವ್ಯರ್ಥ ದೇಹ ದಂಡನೆಯಾಗಬಹುದೇ ಹೊರತು ಯಶಸ್ಸಿನ ಫಲ ಸಿಗಲಾರದು.
ಮೊದಲು ನಡೆಯಬೇಕಾಗಿರುವುದು ಭ್ರಷ್ಟಾಚಾರವನ್ನು ತಡೆಯುವ ಪ್ರಯತ್ನ, ಭ್ರಷ್ಟರನ್ನು ಶಿಕ್ಷಿಸುವುದು ನಂತರದ ಕೆಲಸ. ಈ ಹಿನ್ನೆಲೆಯಲ್ಲಿ ಭ್ರಷ್ಟರನ್ನು ಶಿಕ್ಷಿಸಲು ಲೋಕಪಾಲರನ್ನು ನೇಮಿಸುವ ಮೊದಲು ಭ್ರಷ್ಟರ ಹುಟ್ಟಿಗೆ ಕಾರಣವಾಗಿರುವ ವ್ಯವಸ್ಥೆಯ ಸುಧಾರಣೆಯ ಬಗ್ಗೆ ನಾಗರಿಕ ಸಮಿತಿ ಯೋಚಿಸಬೇಕಾಗಿತ್ತು.
ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರುವ ಮೂಲಕ ಒಂದು ಸ್ವಚ್ಛ, ಪ್ರಾಮಾಣಿಕ ಮತ್ತು ಸೇವಾನಿಷ್ಠ ಸಂಸದರನ್ನೊಳಗೊಂಡ ಸಂಸತ್ ರಚನೆಗೊಳ್ಳುವಂತೆ ಮಾಡಬೇಕಾಗಿತ್ತು.
ಇದು ಅಸಾಧ್ಯವಾದ ಕೆಲಸ ಅಲ್ಲ. ಈಗಿನ ಪ್ರಜಾಪ್ರತಿನಿಧಿ ಕಾಯಿದೆ ಪ್ರಕಾರ ನ್ಯಾಯಾಲಯಗಳಲ್ಲಿ ಮೇಲ್ಮನವಿ ಇತ್ಯರ್ಥಕ್ಕೆ ಬಾಕಿ ಇರುವ ವರೆಗೆ ಎಂತಹ ಘನಘೋರ ಅಪರಾಧಿ ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.
ಚುನಾವಣಾ ಕಾನೂನಿನಲ್ಲಿರುವ ಈ ಲೋಪದ ನಿವಾರಣೆಗಾಗಿಯೇ ಚುನಾವಣಾ ಆಯೋಗ ಪ್ರಮುಖ ಸುಧಾರಣಾ ಕ್ರಮವನ್ನು ಶಿಫಾರಸು ಮಾಡಿದೆ. `ಐದು ವರ್ಷಗಳಿಗಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಅರ್ಹವಾಗಿರುವ ಅಪರಾಧಗಳಲ್ಲಿ ಆರೋಪಿಯಾಗಿರುವವರು, ಒಂದೊಮ್ಮೆ ಆ ಪ್ರಕರಣದ ತೀರ್ಪಿನ ವಿರುದ್ದದ ಮೇಲ್ಮನವಿ ಇತ್ಯರ್ಥಕ್ಕೆ ಬಾಕಿ ಇದ್ದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ~ ಎನ್ನುತ್ತದೆ ಈ ಸುಧಾರಣಾ ಕ್ರಮ.
ಇದೊಂದು ಜಾರಿಯಾದರೆ ಈಗಿನ ಲೋಕಸಭೆಯಲ್ಲಿರುವ ಸುಮಾರು 150 ಕ್ರಿಮಿನಲ್ ಹಿನ್ನೆಲೆಯ ಸದಸ್ಯರು ಜಾಗ ಖಾಲಿ ಮಾಡಬೇಕಾಗುತ್ತದೆ. ಮುಂದಿನ ಚುನಾವಣೆಗಳಲ್ಲಿ ಒಂದಷ್ಟು ಸಜ್ಜನರು ಸಂಸತ್ ಪ್ರವೇಶಿಸುವ ಪ್ರಯತ್ನ ಮಾಡಬಹುದು. ಆಗ ಮಾತ್ರ ಜನಪರವಾದ ಕಾನೂನುಗಳ ರಚನೆ ಮತ್ತು ಅನುಷ್ಠಾನವನ್ನು ನಿರೀಕ್ಷಿಸಲು ಸಾಧ್ಯ.

Monday, June 13, 2011

ಸಂವಿಧಾನೇತರ ಶಕ್ತಿಗಳ ನಿಯಂತ್ರಣದಲ್ಲಿ ಪಕ್ಷಗಳು

ಸಾರ್ವಜನಿಕ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವ ಸಂವಿಧಾನೇತರ ಶಕ್ತಿಗಳಿಂದಾಗಿ ದೇಶದ ಸಂಸದೀಯ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ ಎಂಬ ಹುಯಿಲೆದ್ದಿದೆ. ಆಳುವ ಪಕ್ಷ ವ್ಯಕ್ತಪಡಿಸುತ್ತಿರುವ ಈ ಆತಂಕದಲ್ಲಿ ಸ್ವಹಿತಾಸಕ್ತಿಗಳಿದ್ದರೂ ಸತ್ಯಾಂಶ ಇಲ್ಲವೆಂದಲ್ಲ. ಆದರೆ, ಇದು ಪ್ರಾರಂಭವಾಗಿದ್ದು ಅಣ್ಣಾ ಹಜಾರೆ ಇಲ್ಲವೇ ಬಾಬಾ ರಾಮ್‌ದೇವ್ ಉಪವಾಸ ಸತ್ಯಾಗ್ರಹಗಳಿಂದಲ್ಲ.
ಈ ಎರಡು ಸತ್ಯಾಗ್ರಹಗಳ ಕುರಿತು ಸಂಪೂರ್ಣವಾಗಿ `ಸಂವಿಧಾನೇತರ ಶಕ್ತಿಗಳ ಕುಟಿಲ ಯತ್ನ~ ಎಂದು ಬಣ್ಣಿಸುವುದು ಕೂಡಾ ಸರಿಯಲ್ಲ.
ಶಾಸನರಚನೆಗೆ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಪ್ರಜಾಪ್ರಭುತ್ವದ ವ್ಯಾಪ್ತಿಯಲ್ಲಿಯೇ ಬರುತ್ತದೆ. ದೇಶದಲ್ಲಿ ಹಿಂದೆ ನಡೆದಿರುವ ಮತ್ತು ಈಗಲೂ ನಡೆಯುತ್ತಿರುವ ಅನೇಕ ಚಳವಳಿಗಳು ಇದೇ ಮಾದರಿಯವು.
ಆದರೆ ಶಾಸನರಚನೆಯ ಪ್ರಕ್ರಿಯೆಯಲ್ಲಿಯೂ ತಮ್ಮನ್ನು ಸೇರಿಸಿಕೊಳ್ಳಬೇಕು ಎಂದು ಚಳವಳಿಗಾರರು ಹೇರುವ ಒತ್ತಡ ಪ್ರಜಾಸತ್ತಾತ್ಮಕವಾದುದೇ ಎನ್ನುವುದಷ್ಟೇ ಈಗಿನ ಪ್ರಶ್ನೆ.
`ಅಣ್ಣಾ ಹಜಾರೆ, ನ್ಯಾಯಮೂರ್ತಿ ಎನ್ . ಸಂತೋಷ್ ಹೆಗ್ಡೆ, ಅರವಿಂದ್ ಕೇಜ್ರಿವಾಲ್ ಮೊದಲಾದವರು ಶಾಸನರಚನೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದರಿಂದ ಇದರಲ್ಲಿ ತಪ್ಪಿಲ್ಲ~ ಎಂದು ಈ ಕ್ಷಣದಲ್ಲಿ ಅನಿಸಬಹುದು.
ಆದರೆ ಇದನ್ನೇ ಪೂರ್ವ ನಿದರ್ಶನವಾಗಿ ಇಟ್ಟುಕೊಂಡು ಉಳಿದವರು ಇದೇ ಮಾರ್ಗವನ್ನು ಅನುಸರಿಸಿದರೇ? ಬಹಳ ದೂರವೇನೂ ಹೋಗಬೇಕಾಗಿಲ್ಲ, ನಾಳೆ ಬಾಬಾ ರಾಮ್‌ದೇವ್ ಅವರು ಕಪ್ಪುಹಣ ವಾಪಸು ಪಡೆಯುವ ಕಾನೂನಿನ ರಚನೆಯಲ್ಲಿಯೂ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಉಪವಾಸ ಸತ್ಯಾಗ್ರಹದ ಮೂಲಕ ಹಠ ಹಿಡಿದರೆ? ಅಣ್ಣಾಹಜಾರೆ ಅವರ ಪಾಲ್ಗೊಳ್ಳುವಿಕೆಯನ್ನು ಒಪ್ಪುವವರು
ಬಾಬಾ ರಾಮ್‌ದೇವ್ ಅವರನ್ನೂ ಒಪ್ಪಿಕೊಳ್ಳುವರೇ? ಈ ಪ್ರಶ್ನೆಗಳ ಹಿನ್ನೆಲೆಯಲ್ಲಿ ಸಂವಿಧಾನೇತರ ಶಕ್ತಿಗಳ ಪಾತ್ರವನ್ನು ನೋಡಬೇಕಾಗಿದೆ. ನಮಗೆಅರಿವಿಲ್ಲದಂತೆಯೇ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಾ ಬರುತ್ತಿರುವ ಮತ್ತು ರಾಜಕೀಯ ಪಕ್ಷಗಳು ಶರಣಾಗಿರುವ ಸಂವಿಧಾನೇತರ ಶಕ್ತಿಗಳ ಬಗ್ಗೆಯೂ ಚರ್ಚೆ ನಡೆಯಬೇಕಾಗಿದೆ.
ಸಂವಿಧಾನೇತರ ಶಕ್ತಿಗಳ ಬಗ್ಗೆ ಮಾತನಾಡುವಾಗ ಎಲ್ಲರೂ ತೆರೆಯ ಮುಂದಿನ ಪಾತ್ರಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ನಿಜಕ್ಕೂ ಹಾನಿ ಉಂಟು ಮಾಡುತ್ತಿರುವುದು ತೆರೆಯ ಹಿಂದಿನ ಸಂವಿಧಾನೇತರ ಶಕ್ತಿಗಳು.
ದೇಶದ ಪ್ರಜಾಪ್ರಭುತ್ವದಲ್ಲಿ ಇವುಗಳ ಪ್ರವೇಶವಾಗಿದ್ದು ಎನ್‌ಡಿಎ ಕಾಲದಲ್ಲಿ. ಅದನ್ನೇ ಇನ್ನೊಂದು ರೀತಿಯಲ್ಲಿ ಈಗ ಮುಂದುವರಿಸಿಕೊಂಡು ಹೋಗುತ್ತಿರುವುದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ.
ಸಂವಿಧಾನೇತರ ಶಕ್ತಿಯ ಕಾಣದ ಕೈಗಳ ಪ್ರಭಾವ ಮೊದಲ ಬಾರಿ ದೇಶದ ಅನುಭವಕ್ಕೆ ಬಂದದ್ದು ಅಟಲಬಿಹಾರಿ ವಾಜಪೇಯಿ ಮೊದಲ ಬಾರಿ ಸಂಪುಟ ರಚನೆಗೆ ಸಿದ್ಧತೆ ನಡೆಸುತ್ತಿದ್ದಾಗ. ಜಸ್ವಂತ್‌ಸಿಂಗ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡಬೇಕೆಂದು ಹೊರಟಾಗ `ಕಾಣದ ಕೈ~ ಅವರ ಕಾಲು ಹಿಡಿದು ಎಳೆದಿತ್ತು.

ಈ `ಕಾಣದ ಕೈ~ಗಳು ಯಾರದ್ದೆಂದು ಈ ವರೆಗೆ ಯಾರೂ ಒಪ್ಪಿಕೊಳ್ಳದೆ ಇದ್ದರೂ ಅದು ರಾಷ್ಟ್ರೀಯ ಸ್ವಯಂಸೇವಕ ಸಂಘದ್ದೆಂದು ಎಲ್ಲರಿಗೂ ಗೊತ್ತಿದೆ. ಆ ದಿನದಿಂದ ಪ್ರಾರಂಭಗೊಂಡ ಆ `ಕಾಣದ ಕೈ~ಗಳ ಪ್ರಭಾವ ಎನ್‌ಡಿಎ ಸರ್ಕಾರದ ಆರು ವರ್ಷಗಳ ಅವಧಿಯುದ್ದಕ್ಕೂ ಕಾಣಿಸಿಕೊಂಡಿತು.

ಪ್ರತಿ ಬಾರಿ ಸಚಿವ ಸಂಪುಟ ರಚನೆಗೆ ಮೊದಲು ಬಿಜೆಪಿಯ ಹಿರಿಯ ನಾಯಕರು ನಾಗಪುರದಲ್ಲಿರುವ ಆರ್‌ಎಸ್‌ಎಸ್ ಹಿರಿಯರೊಂದಿಗೆ ಸಮಾಲೋಚನೆ ನಡೆಸಬೇಕಾಗಿತ್ತು, ಇಲ್ಲವೇ, ದೆಹಲಿಯ ಜಂಡೇಲಾದಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಬೇಕಾಗಿತ್ತು.
ಬಿಜೆಪಿ ಪಾಲಿಗೆ ಋಣ ಪರಿಹಾರ ಅನಿವಾರ‌್ಯವಾಗಿತ್ತು. ಅದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದದ್ದು ಸ್ವಂತ ಬಲದಿಂದ ಅಲ್ಲ, ಸಂಘ ಪರಿವಾರದ ಬೆಂಬಲದಿಂದ ಎಂಬುದು ವಿರೋಧಪಕ್ಷಗಳ ಆರೋಪವಷ್ಟೇ ಅಲ್ಲ, ಬಿಜೆಪಿ ಕೂಡಾ ಆಂತರ್ಯದಲ್ಲಿ ಹಾಗೆಯೇ ತಿಳಿದುಕೊಂಡಿತ್ತು.
ಯಾಕೆಂದರೆ ಬಿಜೆಪಿಯನ್ನು ದೆಹಲಿಯ ಸಿಂಹಾಸನದಲ್ಲಿ ಕರೆದೊಯ್ದು ಕೂರಿಸಿದ್ದು ರಾಮಜನ್ಮಭೂಮಿ ಚಳವಳಿ. ಅದು ಮೂಲತಃ ಬಿಜೆಪಿಯ ಅಜೆಂಡಾ ಆಗಿರಲಿಲ್ಲ. 80ರ ದಶಕದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾರಂಭಿಸಿದ್ದ ರಾಮಜನ್ಮಭೂಮಿ ಚಳವಳಿಗೆ ಬಿಜೆಪಿ ಅಧಿಕೃತವಾಗಿ ಪ್ರವೇಶಿಸಿದ್ದು 1989ರಲ್ಲಿ,
ಪಾಲಂಪುರದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ‌್ಯಕಾರಿ ಮಂಡಳಿ ಸಭೆಯಲ್ಲಿ ಕೈಗೊಂಡ ಗೊತ್ತುವಳಿ ಮೂಲಕ. ರಾಮಮಂದಿರ ನಿರ್ಮಾಣ, ಸಮಾನ ನಾಗರಿಕ ಸಂಹಿತೆ,  ಸಂವಿಧಾನದ 370ನೇ ಪರಿಚ್ಛೇದದ ರದ್ದತಿ..ಇವೆಲ್ಲವೂ ಮೂಲತಃ ಸಂಘ ಪರಿವಾರದ ಬೇಡಿಕೆಗಳೇ ಹೊರತು ಬಿಜೆಪಿಯವಲ್ಲ.
ಈ ಬೇಡಿಕೆಗಳನ್ನೆತ್ತಿಕೊಂಡು ರಾಜಕೀಯ ಹೋರಾಟ ನಡೆಸಿದ ಕಾರಣದಿಂದಾಗಿಯೇ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಸಂಘ ಪರಿವಾರ ಬಲವಾಗಿ ನಂಬಿದೆ. ಆ ನಂಬಿಕೆಯ ಬಲದಿಂದಲೇ ಹೆಜ್ಜೆ ಹೆಜ್ಜೆಗೂ ಎನ್‌ಡಿಎ ಸರ್ಕಾರವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಸಂಘ ಪರಿವಾರ ಪ್ರಯತ್ನ ನಡೆಸಿದ್ದು.
ಆರು ವರ್ಷಗಳ ವಾಜಪೇಯಿ ಅಧಿಕಾರವಧಿ ಪಕ್ಷ ಮತ್ತು ಸಂಘದ ನಡುವಿನ ನಿತ್ಯ ಸಂಘರ್ಷದ ಕಾಲವೂ ಆಗಿತ್ತು. ಆದರೆ ವಾಜಪೇಯಿ ಅವರ ನಾಯಕತ್ವಕ್ಕೆ ಇದ್ದ ಪ್ರಭಾವಳಿಯಿಂದಾಗಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಲು ಸಂಘಕ್ಕೆ ಸಾಧ್ಯವಾಗಿರಲಿಲ್ಲ.
ಈ ಹತಾಶೆಯಿಂದಲೇ ವಾಜಪೇಯಿ ಮತ್ತು ಅಡ್ವಾಣಿಯವರು ನಿವೃತ್ತಿಯಾಗಬೇಕೆಂದು ಬಹಿರಂಗ ಹೇಳಿಕೆ ನೀಡುವ ಮೂಲಕ ಆರ್‌ಎಸ್‌ಎಸ್ ಸರಸಂಘ ಚಾಲಕರು ಅವಮಾನಿಸಿದ್ದು. 2004ರಲ್ಲಿ ಬಿಜೆಪಿ ಸ್ವಂತಬಲದಿಂದ  `ಅಭಿವೃದ್ಧಿ~ಯ ಅಜೆಂಡಾದ ಮೂಲಕ ಲೋಕಸಭಾ ಚುನಾವಣೆಯನ್ನು ಎದುರಿಸಲು ಪ್ರಯತ್ನಿಸಿದ್ದು ನಿಜ. 
ಪ್ರಮೋದ್ ಮಹಾಜನ್ ಅವರು ಈ ಕಾರ‌್ಯತಂತ್ರವನ್ನು ರೂಪಿಸಿದ್ದರು. ಗುಜರಾತ್ ಯಶಸ್ಸಿನ ಆಕರ್ಷಣೆಗೆ ಬಲಿಯಾಗದೆ ವಾಜಪೇಯಿ ಅವರ ಸಾಧನೆಯನ್ನೇ ಮುಂದಿಟ್ಟುಕೊಂಡು `ಪ್ರಕಾಶಿಸುತ್ತಿರುವ ಭಾರತ~ದ ಮೂಲಕ ಬಿಜೆಪಿ ಚುನಾವಣೆ ಎದುರಿಸಿತ್ತು.
ಆಗ ಅನುಭವಿಸಿದ ಸೋಲು ಪಕ್ಷದೊಳಗಿರುವ ಸಂಘಪ್ರೇಮಿಗಳ ಕೈಗಳನ್ನು ಮತ್ತೆ ಬಲಪಡಿಸಿತ್ತು. ಅದರ ನಂತರ ಗೊಂದಲದಲ್ಲಿದ್ದ ಬಿಜೆಪಿ, ಈಗ ಮತ್ತೆ ತಮ್ಮ ಹಳೆಯ ದಿನಗಳಿಗೆ ಮರಳುವ ಪ್ರಯತ್ನ ಮಾಡುತ್ತಿದೆ.
ಈ ಬಾರಿ ಇದಕ್ಕೆ ಪ್ರೇರಣೆಯನ್ನು ಬಿಜೆಪಿ ಕರ್ನಾಟಕದಿಂದಲೇ ಪಡೆದಿರಬಹುದು. ಭ್ರಷ್ಟಾಚಾರದ ಹಗರಣಗಳ ಆರೋಪಕ್ಕೆ ಸಿಕ್ಕಿ ತತ್ತರಿಸಿಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆತ್ಮರಕ್ಷಣೆಗಾಗಿ ಬಳಸುತ್ತಿರುವುದು ಜಾತಿಮಠಗಳೆಂಬ ಸಂವಿಧಾನೇತರ ಶಕ್ತಿಗಳ ಬೆಂಬಲದ ಅಸ್ತ್ರವನ್ನೇ ಅಲ್ಲವೇ? ಸರ್ಕಾರ ಬೇಕಾಬಿಟ್ಟಿಯಾಗಿ ಹಂಚಿರುವ ಹಣವನ್ನು ಪಡೆದ ಮಠಗಳು ಋಣ ತೀರಿಸಲೆಂಬಂತೆ ಮುಖ್ಯಮಂತ್ರಿಗಳ ರಕ್ಷಣೆಗೆ ನಿಂತಿವೆ.
`ಅವರನ್ನು ಮುಟ್ಟಿದರೆ ಜೋಕೆ~ ಎಂದು ಬೆದರಿಕೆ ಹಾಕುವ ಮಟ್ಟಕ್ಕೆ ಸ್ವಾಮಿಗಳು ಹೋಗಿದ್ದಾರೆ. ಸಚಿವ ಸಂಪುಟಕ್ಕೆ ಸೇರ್ಪಡೆಯಿಂದ ಹಿಡಿದು ಅಧಿಕಾರಿಗಳ ವರ್ಗಾವಣೆವರೆಗೆ ಸರ್ಕಾರ ಕೈಗೊಳ್ಳಬೇಕಾಗಿರುವ ನಿರ್ಧಾರಗಳು ಜಾತಿ ಮಠಗಳ ಅಂತರಂಗದ ಚಾವಡಿಗಳಲ್ಲಿ ನಡೆಯುತ್ತಿರುವುದನ್ನು ಸರ್ಕಾರದ ಮೇಲಿನ ಸಂವಿಧಾನೇತರ ಶಕ್ತಿಗಳ ನಿಯಂತ್ರಣವೆನ್ನದೆ ಬೇರೆ ಏನೆಂದು ಕರೆಯಲು ಸಾಧ್ಯ?
ಯುಪಿಎ ಸರ್ಕಾರದೊಳಗಿನ ಈಗಿನ ಸ್ಥಿತಿ ವಾಜಪೇಯಿ ಕಾಲದ ಬಿಜೆಪಿಗಿಂತ ಭಿನ್ನವಾಗಿ ಇಲ್ಲ. ವಂಶಪರಂಪರೆಯ ರಾಜಕೀಯ ಕಾಂಗ್ರೆಸ್ ಪಕ್ಷದ ಮೇಲಿರುವ ಹಳೆಯ ಆರೋಪ.

ಆದರೆ ಆ ಪಕ್ಷದ ನಾಯಕತ್ವ ವಹಿಸುತ್ತಾ ಬಂದ ನೆಹರೂ ಕುಟುಂಬದ ಸದಸ್ಯರು ಚುನಾವಣೆಗಳನ್ನು ಎದುರಿಸಿ ಸೋಲು-ಗೆಲುವುಗಳನ್ನು ಅನುಭವಿಸಿದವರೇ ಆಗಿರುವ ಕಾರಣ ಅವರ ರಾಜಕೀಯ ಜೀವನ ಪ್ರಜಾಪ್ರಭುತ್ವದ ಚೌಕಟ್ಟಿನೊಳಗಡೆಯೇ ಇತ್ತು. ಆದ್ದರಿಂದ ಕಾಂಗ್ರೆಸ್ ಮೇಲಿನ ನೆಹರೂ ಕುಟುಂಬದ ನಿಯಂತ್ರಣವನ್ನು ಸಂವಿಧಾನೇತರ ಶಕ್ತಿಯ ನಿಯಂತ್ರಣ ಎಂದು ವ್ಯಾಖ್ಯಾನ ಮಾಡಲಾಗುವುದಿಲ್ಲ.
ಆದರೆ 2004ರ ಲೋಕಸಭಾ ಚುನಾವಣೆಯ ನಂತರ ಈ ಚಿತ್ರ ಬದಲಾಗಿ ಹೋಗಿದೆ. ಸೋನಿಯಾಗಾಂಧಿ ನೇತೃತ್ವದಲ್ಲಿಯೇ ಪಕ್ಷ ಚುನಾವಣೆ ಎದುರಿಸಿದರೂ ಪ್ರಧಾನಿಯಾಗಿದ್ದು ಮಾತ್ರ ಮನಮೋಹನ್‌ಸಿಂಗ್. ಭಾರತದ ರಾಜಕೀಯ ಸಂದರ್ಭದಲ್ಲಿ ಇದೊಂದು ಹೊಸ ಪ್ರಯೋಗ.
ರಾಜಕೀಯವಾದ ಬಿಕ್ಕಟ್ಟುಗಳಿಗೆ ಸೋನಿಯಾಗಾಂಧಿಯವರೇ ತಲೆಕೊಡುತ್ತಿರುವ ಕಾರಣ ಪ್ರಧಾನಿಯಾದವರು ಆಡಳಿತೇತರ ಜಂಜಾಟಗಳಿಂದ ಮುಕ್ತವಾಗಿ ಆಡಳಿತ ನಡೆಸಲು ಸಾಧ್ಯವಾಗಬಹುದೆಂಬ ನಿರೀಕ್ಷೆ ಇತ್ತು.

ಆಡಳಿತ ಸೂತ್ರ ಕೈಯಲ್ಲಿದ್ದರೂ ರಾಜಕೀಯ ಅಧಿಕಾರ ಇಲ್ಲದ ನಾಯಕ ಎಷ್ಟೇ ಸಮರ್ಥನಾಗಿದ್ದರೂ ಹೇಗೆ ಅಸಹಾಯಕ ಮತ್ತು ನಿಷ್ಪ್ರಯೋಜಕನಾಗುತ್ತಾನೆ ಎನ್ನುವುದಕ್ಕೆ ಮನಮೋಹನ್‌ಸಿಂಗ್ ಸಾಕ್ಷಿ.
ಸೋನಿಯಾ ಗಾಂಧಿಯವರ ಈ ಪಾತ್ರ ನಿರ್ವಹಣೆ ಕೂಡಾ ಸಂವಿಧಾನೇತರ ಶಕ್ತಿಯ ನಿಯಂತ್ರಣ ಅಲ್ಲ ಎಂದು ತಳ್ಳಿಹಾಕಬಹುದು. ಆದರೆ, ಅವರ ಪಾತ್ರ ಅಷ್ಟಕ್ಕೆ ಕೊನೆಗೊಂಡಿಲ್ಲ.
`ಸೂಪರ್ ಕ್ಯಾಬಿನೆಟ್~ ಎಂಬ ಆರೋಪಕ್ಕೊಳಗಾಗಿರುವ `ರಾಷ್ಟ್ರೀಯ ಸಲಹಾ ಮಂಡಳಿ~ಯನ್ನು (ಎನ್‌ಎಸಿ) ಅವರು ಹುಟ್ಟು ಹಾಕಿದ್ದಾರೆ. ಅದಕ್ಕೆ ಅವರೇ ಅಧ್ಯಕ್ಷರು. ಎಂಎನ್‌ಆರ್‌ಇಜಿಪಿ, ಮಾಹಿತಿ ಹಕ್ಕು, ಅರಣ್ಯ ಹಕ್ಕು, ಶಿಕ್ಷಣದ ಹಕ್ಕು, ಭೂ ಸ್ವಾಧೀನ ಮತ್ತು ಪುನರ್ವಸತಿ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮೊದಲಾದ ಪ್ರಮುಖ ವಿಷಯಗಳಿಗೆ ಸಂಬಂಧಿಸಿದ ಕಾನೂನಿನ ಕರಡುಗಳನ್ನು ರೂಪಿಸಿದ್ದು ಯುಪಿಎ ಸರ್ಕಾರವಲ್ಲ, ಅದು ಎನ್‌ಎಸಿ.
ಇತ್ತೀಚೆಗೆ ವಿವಾದ ಸೃಷ್ಟಿಸಿರುವ ಕೋಮು ಹಿಂಸೆ ನಿಯಂತ್ರಣ ಮಸೂದೆ ರಚಿಸಿರುವುದು ಎನ್‌ಎಸಿ. ಶಾಸನ ರಚನೆಗಾಗಿಯೇ ಶಾಸಕಾಂಗ ಇರುವಾಗ ಅದಕ್ಕೆ ಪರ‌್ಯಾಯವಾಗಿ ಇಂತಹ ಸಂಸ್ಥೆಯೊಂದನ್ನು ಹುಟ್ಟುಹಾಕಿ ಕಾಂಗ್ರೆಸ್ ಪಕ್ಷದೊಳಗೂ ಸಂವಿಧಾನೇತರ ಸಂಸ್ಥೆಯ ಪ್ರವೇಶಕ್ಕೆ ಸೋನಿಯಾಗಾಂಧಿ ದಾರಿಮಾಡಿಕೊಟ್ಟಿದ್ದಾರೆ.
ಇದರಲ್ಲಿ ಸದಸ್ಯರಾಗಿರುವವರಲ್ಲಿ ಹೆಚ್ಚಿನವರು ಸರ್ಕಾರೇತರ ಸೇವಾ ಸಂಸ್ಥೆಗಳ (ಎನ್‌ಜಿಒ) ಜತೆ ತಮ್ಮನ್ನು ಗುರುತಿಸಿಕೊಂಡವರು. ಅಣ್ಣಾ ಹಜಾರೆ ನೇತೃತ್ವದ ನಾಗರಿಕ ಸಮಿತಿ ಮತ್ತು ಎನ್‌ಎಸಿ ಸದಸ್ಯರ ನಡುವೆ ಹಲವಾರು ಸಾಮ್ಯತೆಗಳಿವೆ.
ಈ ಎರಡೂ ಗುಂಪಿನ ಅನೇಕ ಸದಸ್ಯರು ರಾಜಕಾರಣಿಗಳನ್ನು ದ್ವೇಷಿಸುತ್ತಾರೆ, ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಇಷ್ಟಪಡುವುದಿಲ್ಲ, ಆದರೆ ತಮ್ಮ ಮಾತನ್ನು ಚುನಾಯಿತ ಸರ್ಕಾರ ಕೇಳಬೇಕೆಂದು ಬಯಸುತ್ತಾರೆ.
ಭ್ರಷ್ಟತೆ ಮತ್ತು ಅಸಾಮರ್ಥ್ಯಗಳ ಕಾರಣ ಸಹೋದ್ಯೋಗಿಗಳ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿರುವ ಸೋನಿಯಾಗಾಂಧಿ, ಈ `ಜೋಲಾವಾಲಾ~ಗಳ ಮೇಲೆ ಹೆಚ್ಚು ಹೆಚ್ಚು ಅವಲಂಬನೆಗೊಳಗಾದಂತೆ ಕಾಣಿಸುತ್ತಿದೆ.
ಸರ್ಕಾರ ಈಗ ಎದುರಿಸುತ್ತಿರುವ ಬಿಕ್ಕಟ್ಟಿಗೆ ಅಣ್ಣಾಹಜಾರೆ ನೇತೃತ್ವದ ನಾಗರಿಕ ಸಮಿತಿಯ ಸದಸ್ಯರು ಮತ್ತು ಎನ್‌ಎಸಿ ಸದಸ್ಯರ ನಡುವಿನ ವ್ಯಕ್ತಿ ಪ್ರತಿಷ್ಠೆಯ ಸಂಘರ್ಷವೂ ಕಾರಣ.

`ನಾಗರಿಕ ಸಮಿತಿ~ಗಳು ಚುನಾಯಿತ ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡುತ್ತಿದೆ ಎಂದು ಬೊಬ್ಬಿಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನದೇ ಸರ್ಕಾರದ ತಲೆಮೇಲೆ `ನಾಗರಿಕ ಸಮಿತಿ~ಯ ಇನ್ನೊಂದು ರೂಪವಾದ ಎನ್‌ಎಸಿಯನ್ನು ಕೂರಿಸಿರುವುದನ್ನು ಹೇಗೆ ಸಮರ್ಥಿಸಿಕೊಳ್ಳಲು ಸಾಧ್ಯ? ಇದರಿಂದ ಸಂಸದೀಯ ಪ್ರಜಾಪ್ರಭುತ್ವ ದುರ್ಬಲಗೊಳ್ಳುವುದಿಲ್ಲವೇ?
ಈ ರೀತಿ ಕಾಂಗ್ರೆಸ್ ಪಕ್ಷ ಬಿಜೆಪಿ ಹಿಂದೆ ಮಾಡಿದ್ದ ತಪ್ಪನ್ನೇ ಮಾಡುತ್ತಿದ್ದರೆ, ಅನುಭವದಿಂದ ಪಾಠ ಕಲಿಯದ ಬಿಜೆಪಿ ಹಳೆಯ ತಪ್ಪನ್ನೇ ಪುನರಾವರ್ತಿಸಲು ಹೊರಟಿದೆ.
ಜವಾಬ್ದಾರಿಯುತ ವಿರೋಧಪಕ್ಷವಾಗಿ ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಳುವ ಪಕ್ಷದ ಜತೆ ಮುಖಾಮುಖಿ ರಾಜಕೀಯ ಹೋರಾಟಕ್ಕಿಳಿಯಬೇಕಾದ ಬಿಜೆಪಿ ಬಾಬಾ ರಾಮ್‌ದೇವ್ ಅವರಂತಹವರ ಬೆನ್ನಹಿಂದೆ ನಿಂತು ರಾಜಕೀಯ ಮಾಡುತ್ತಿದೆ.
ಜನತೆಯ ಬೆಂಬಲದ ಮೂಲಕ ರಾಜಕೀಯ ಶಕ್ತಿಯನ್ನು ಗಳಿಸಬೇಕಾದ ಈ ರಾಜಕೀಯ ಪಕ್ಷ, ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಹತಾಶರಾಗಿರುವ ಒಬ್ಬ ಯೋಗಗುರುವಿನ ಮೂಲಕ ರಾಜಕೀಯ ಮರುಜನ್ಮ ಪಡೆಯುವ ವ್ಯರ್ಥ ಪ್ರಯತ್ನದಲ್ಲಿದೆ.
ತಮ್ಮ ಪಕ್ಷದ ನಾಯಕರಾದ ಎಲ್.ಕೆ.ಅಡ್ವಾಣಿ ಅವರು ರಾಮ್‌ದೇವ್‌ಗಿಂತಲೂ ಮೊದಲು ಕಪ್ಪುಹಣದ ವಿಷಯವನ್ನು ಸಾರ್ವಜನಿಕ ಚರ್ಚೆಯ ಅಂಗಳಕ್ಕೆ ಎಳೆದು ತಂದವರು ಎನ್ನುವುದನ್ನು ಬಿಜೆಪಿ ಮರೆತುಬಿಟ್ಟಂತೆ ಕಾಣುತ್ತಿದೆ.
ಸಮರ್ಥ ನಾಯಕರಿಲ್ಲದೆ ದುರ್ಬಲವಾಗಿರುವ ವಿರೋಧ ಪಕ್ಷವಾದ ಬಿಜೆಪಿ ಸಂವಿಧಾನೇತರ ಶಕ್ತಿಗಳಾದ ಸಂಘ ಪರಿವಾರ ಮತ್ತು ಸಾಧು-ಸಂತರಿಗೆ ಶರಣಾಗಿರುವುದು ಭವಿಷ್ಯದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಇನ್ನಷ್ಟು ದುರ್ಬಲಗೊಳ್ಳಲಿದೆ ಎನ್ನುವುದಕ್ಕೆ ಸೂಚನೆ. ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯಬೇಕಾಗಿರುವುದು ಈ ಕಾರಣಕ್ಕಾಗಿ.

Monday, June 6, 2011

ರಾಜಕೀಯ ಮೈದಾನದಲ್ಲಿ ಎಡವಿಬಿದ್ದ ಯೋಗಗುರು

ಯೋಗಗುರು ಬಾಬಾ ರಾಮ್‌ದೇವ್ ಅವರ ಜತೆ ಉಪವಾಸದಲ್ಲಿ ಪಾಲ್ಗೊಳ್ಳಲು ಹೋಗಿದ್ದ ಸಾವಿರಾರು ಸಂಖ್ಯೆಯ ಬೆಂಬಲಿಗರು ಎರಡು ಬಗೆಯ ನೋವಿನಿಂದ ನರಳುತ್ತಿರಬಹುದು.
ಒಂದು ಯುಪಿಎ ಸರ್ಕಾರ ನಡೆಸಿದ್ದ ಪೊಲೀಸ್ ಕಾರ‌್ಯಾಚರಣೆಯಿಂದಾಗಿ ದೇಹದ ಮೇಲೆ ಆಗಿರುವ ಗಾಯದ ನೋವು. ಇನ್ನೊಂದು ತಾವು ದೇವರೆಂದೇ ಬಗೆದಿರುವ ಯೋಗಗುರು, ತಾನು ಉಪವಾಸ ಕೈಬಿಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಟ್ಟಾಗಿ ಪತ್ರ ಕೊಡುವ ಮೂಲಕ ಮಾಡಿದ ವಿಶ್ವಾಸಘಾತದಿಂದ ಮನಸ್ಸಿಗಾದ ನೋವು.
ದೇಹದ ಮೇಲೆ ಆಗಿರುವ ನೋವಿನಷ್ಟು ಸುಲಭದಲ್ಲಿ ಮನಸ್ಸಿನ ಮೇಲಿನ ಗಾಯ ಗುಣವಾಗುವುದಿಲ್ಲ ಎಂದು ಹೇಳುತ್ತಾರೆ. ಬಾಬಾ ತನ್ನ ಯಾವ ಯೋಗಶಕ್ತಿಯ ಮೂಲಕ ಈ ನೋವನ್ನು ಶಮನಮಾಡಿ ಬೆಂಬಲಿಗರನ್ನು ಒಲಿಸಿಕೊಳ್ಳಲಿದ್ದಾರೆ ಎನ್ನುವುದನ್ನು ನೋಡಲು ಕೆಲವು ದಿನ ಕಾಯಬೇಕು.
ಯಾರದು ದೊಡ್ಡ ತಪ್ಪು ಎಂದು ತೀರ್ಮಾನಿಸುವುದು ಸ್ವಲ್ಪ ಕಷ್ಟ. ಆದರೆ ಒಬ್ಬ ಆರೋಪಿಯಿಂದ ಪ್ರಾಮಾಣಿಕತೆಯ ನಡವಳಿಕೆಯನ್ನು ನಿರೀಕ್ಷಿಸಲು ಸಾಧ್ಯವಾಗದು. ಆದರೆ ಆತನ ವಿರುದ್ಧ ನಿಂತವರು ಮಾತ್ರ ಅಪ್ರಾಮಾಣಿಕರಾಗಬಾರದು.

ಇಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿರುವುದು ಕೇಂದ್ರದ ಯುಪಿಎ ಸರ್ಕಾರ. ತನ್ನನ್ನು ರಕ್ಷಿಸಿಕೊಳ್ಳಲು ಯಾವುದೇ ಬಗೆಯ ಹೀನಕೃತ್ಯ ಎಸಗಲು ಹಿಂಜರಿಯದಿರುವುದು ಆರೋಪಿಯ ಸಹಜ ಸ್ವಭಾವ.
ಆದ್ದರಿಂದ ಬಾಬಾ ರಾಮ್‌ದೇವ್ ಅವರ ಆಮರಣ ಉಪವಾಸ ಸತ್ಯಾಗ್ರಹವನ್ನು ಭಂಗಗೊಳಿಸಲು ಯುಪಿಎ ಸರ್ಕಾರ ಸಂಚು ಮಾಡಿದ್ದರಲ್ಲಿ ಆಶ್ಚರ‌್ಯವೇನಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿ ಆತ್ಮವಿಶ್ವಾಸವನ್ನು ಕಳೆದುಕೊಂಡು ಹತಾಶೆಗೀಡಾದ ಸರ್ಕಾರ ಮಾತ್ರ ಇಂತಹ ಬರ್ಬರಕೃತ್ಯ ನಡೆಸಲು ಸಾಧ್ಯ.
ಇತ್ತೀಚೆಗೆ ಅಣ್ಣಾ ಹಜಾರೆ ಅವರ ಉಪವಾಸವನ್ನು ತಡೆಯಲು ಇದೇ ಸರ್ಕಾರ ನಡೆಸಿದ್ದ ಕರಾಮತ್ತುಗಳೇನು, ಲೋಕಪಾಲ ಮಸೂದೆ ರಚನೆಯ ಪ್ರಯತ್ನದ ಹಾದಿ ತಪ್ಪಿಸಲು ಅದು ಏನು ಮಾಡುತ್ತಿದೆ ಎನ್ನುವುದು ದೇಶದ ಜನರಿಗೆಲ್ಲ ಈಗ ತಿಳಿದಿದೆ.

ಇವೆಲ್ಲವೂ ಗೊತ್ತಿದ್ದೂ ಇಂತಹ ಸರ್ಕಾರದ ಜತೆ ವ್ಯವಹರಿಸುವಾಗ ಸ್ವಲ್ಪ ಎಚ್ಚರದಿಂದ ಇರುವುದು ಬೇಡವೇ? ಮಾನಸಿಕ ಒತ್ತಡದಿಂದ ಪಾರಾಗಲು ಯೋಗ ಮಾಡಿ ಎಂದು ಉಪದೇಶ ನೀಡುವ ಯೋಗಗುರು `ನಾನು ಒತ್ತಡಕ್ಕೆ ಸಿಕ್ಕಿ ಆ ಪತ್ರ ಬರೆದುಕೊಟ್ಟೆ~ ಎಂದು ಹೇಳಿದರೆ, ಅವರು ಹೇಳಿದ್ದನ್ನೆಲ್ಲ ನಂಬಿರುವ ಅನುಯಾಯಿಗಳು ಏನು ಮಾಡಬೇಕು?
ಇಂತಹ ವಿವಾದಗಳು ಬಾಬಾ ರಾಮ್‌ದೇವ್ ಪಾಲಿಗೆ ಹೊಸದೇನಲ್ಲ, ಅವರ ಜನಪ್ರಿಯತೆಯ ಸೌಧ ದಿನದಿಂದ ದಿನಕ್ಕೆ ಎತ್ತರಕ್ಕೆ ಏರುತ್ತಿರುವ ಜತೆಯಲ್ಲಿಯೇ ವಿವಾದಗಳ ಹುತ್ತ ಕೂಡಾ ಪಕ್ಕದಲ್ಲಿ ಬೆಳೆಯುತ್ತಿದೆ.
ಕಪ್ಪುಹಣದ ವಿರುದ್ಧ ಯೋಗಗುರು ಬಾಬಾ ರಾಮ್‌ದೇವ್ ಎತ್ತಿರುವ ದನಿ ಸರಿಯಾಗಿಯೇ ಇದೆ. ಕಳೆದ 8-9 ತಿಂಗಳುಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡಿ ಕಪ್ಪುಹಣದ ವಿರುದ್ಧ ಜನರನ್ನು ಸಂಘಟಿಸಿರುವ ಅವರ ಶ್ರಮ ಕೂಡಾ ಮೆಚ್ಚುವಂತಹದ್ದೇ ಆಗಿದೆ.
ಇವೆಲ್ಲವನ್ನು ಸುಮ್ಮನೆ ನೋಡುತ್ತಾ ಕಾಲಹರಣ ಮಾಡುತ್ತಿದ್ದ ಕೇಂದ್ರ ಸರ್ಕಾರವನ್ನು ಮಣಿಸಲು ಅವರು ಕೈಗೊಂಡಿರುವ ಆಮರಣ ಉಪವಾಸ ಕೂಡಾ ದೇಶಕ್ಕೆ ಹೊಸತೇನಲ್ಲ. ಅದರ ಬಲದಿಂದಲೇ ಅಲ್ಲವೇ ನಾವು ಬ್ರಿಟಿಷರ ಗುಲಾಮಗಿರಿಯಿಂದ ಬಿಡುಗಡೆ ಪಡೆದು ಸ್ವತಂತ್ರರಾಗಿದ್ದು.
ಇಂತಹ ಶಕ್ತಿಶಾಲಿ ಅಸ್ತ್ರವನ್ನು ಬಾಬಾ ರಾಮ್‌ದೇವ್ ಪ್ರಯೋಗಿಸಿದ್ದರಲ್ಲಿಯೂ ತಪ್ಪೇನಿಲ್ಲ. ಇವಿಷ್ಟೇ ಬಾಬಾ ರಾಮ್‌ದೇವ್ ಆಗಿದ್ದರೆ ಇಡೀ ದೇಶ ಅವರ ಕಾಲಿಗೆ ಬೀಳಬೇಕು. ಆದರೆ `ಬಾಬಾ ರಾಮ್‌ದೇವ್ ಅಂದರೆ ಇಷ್ಟೇ ಅಲ್ಲ~ ಎನ್ನುವ ಗುಮಾನಿಯೇ ಅವರ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳುವಂತೆ ಮಾಡಿದೆ.
ಮೊದಲನೆಯದು ಅವರ ರಾಜಕೀಯ ನಿಲುವು. ಕಳೆದ ವರ್ಷ ಬಾಬಾ ರಾಮ್‌ದೇವ್ ಅವರು ರಾಜಕೀಯ ಪಕ್ಷವೊಂದನ್ನು ಸ್ಥಾಪಿಸುವ ಉದ್ದೇಶವನ್ನು ಬಹಿರಂಗಪಡಿಸಿದ್ದರು. ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಅವರು ಘೋಷಿಸಿದ್ದರು. ಇದರಲ್ಲಿಯೂ ತಪ್ಪೇನಿಲ್ಲ. ಅವರ ಇತ್ತೀಚಿನ ಯೋಗ ಶಿಬಿರಗಳಲ್ಲಿ ಯೋಗಕ್ಕಿಂತ ಹೆಚ್ಚು ದೇಶದ ರಾಜಕೀಯದ ಬಗ್ಗೆಯೇ ಅವರು ಹೆಚ್ಚು ಚರ್ಚಿಸುತ್ತಿದ್ದರು.
ಎಲ್ಲ ಪಕ್ಷಗಳು ಭ್ರಷ್ಟಗೊಂಡಿರುವ ವರ್ತಮಾನದ ಸ್ಥಿತಿಯಲ್ಲಿ ಹೊಸ ಬಗೆಯ ರಾಜಕೀಯದ ಅಗತ್ಯ ಇದ್ದ ಕಾರಣ ಆ ಚರ್ಚೆ ಕೂಡಾ ಪ್ರಸ್ತುತವಾಗಿತ್ತು. ಈ ಎಲ್ಲ ಪ್ರಯತ್ನಗಳು ರಾಜಕೀಯ ಪಕ್ಷವೊಂದರ ಸ್ಥಾಪನೆಯಲ್ಲಿ ತಾರ್ಕಿಕ ಅಂತ್ಯ ಕಾಣಬಹುದೆಂದು ಅವರ ಲಕ್ಷಾಂತರ ಅನುಯಾಯಿಗಳು ಮತ್ತು ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಇದ್ದಕ್ಕಿದ್ದಂತೆ ಒಂದು ದಿನ `ನಾನು ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಿಲ್ಲ, ಯುವಜನರ ಸಂಘಟನೆ ಕಟ್ಟುತ್ತೇನೆ~ ಎಂದು ಘೋಷಿಸಿದರು. ಕೊನೆಗೆ ಎರಡನ್ನೂ ಕೈಬಿಟ್ಟು ಉಪವಾಸ ಸತ್ಯಾಗ್ರಹ ನಡೆಸಲು ಹೊರಟರು. ಈ ಬದಲಾದ ನಿಲುವಿನ ಹಿಂದಿನ ಲೆಕ್ಕಾಚಾರ ಏನು? ಹೊಸಪಕ್ಷದ ಬದಲಿಗೆ ಯಾವುದಾದರೂ ಹಳೆಯ ಪಕ್ಷವನ್ನು ಬೆಂಬಲಿಸುವ ಯೋಚನೆಯೇನಾದರೂ ಅವರಲ್ಲಿದೆಯೇ?
ಎರಡನೆಯದು ಅವರು ಆರಿಸಿಕೊಂಡ ಉಪವಾಸ ಸತ್ಯಾಗ್ರಹದ ಮಾರ್ಗ. ಅಶ್ಚರ‌್ಯವೆಂದರೆ ಸಮಾಜ ಸೇವಕ ಅಣ್ಣಾ ಹಜಾರೆ ಅವರು ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ವರೆಗೆ ಬಾಬಾ ರಾಮ್‌ದೇವ್ ಎಂದೂ ಉಪವಾಸ ಸತ್ಯಾಗ್ರಹದ ಬಗ್ಗೆ ಮಾತನಾಡಿರಲಿಲ್ಲ.
ಬಹುಶಃ ಅಂತಹದ್ದೊಂದು ಉದ್ದೇಶ ಅವರಲ್ಲಿತ್ತು ಎಂದು ಗೊತ್ತಿದ್ದರೆ ಅಣ್ಣಾ ಹಜಾರೆ ಅವರು ಪ್ರತ್ಯೇಕವಾಗಿ ಉಪವಾಸ ಕೂರುತ್ತಿರಲಿಲ್ಲವೇನೋ? ಇಬ್ಬರೂ ಕೂಡಿ ಉಪವಾಸ ಕೂತಿದ್ದರೆ ಭ್ರಷ್ಟಾಚಾರದ ವಿರುದ್ಧ ಸಿಡಿದು ನಿಂತಿರುವ ಜನ ಎರಡು ಶಿಬಿರಗಳಲ್ಲಿ ಹಂಚಿಹೋಗುತ್ತಿರಲಿಲ್ಲವೇನೋ? ಬಾಬಾ ರಾಮ್‌ದೇವ್ ಅವರ ಕೆಲವು ಬೇಡಿಕೆಗಳು ಲೋಕಪಾಲ ಮಸೂದೆಯ ವ್ಯಾಪ್ತಿಯಲ್ಲಿಯೇ ಬರುವುದರಿಂದ ಅದು ಅಂತಿಮ ರೂಪ ಪಡೆಯುವ ವರೆಗಾದರೂ ಅವರು ಕಾಯಬಹುದಿತ್ತು.

ಆದರೆ ಬಾಬಾ ರಾಮ್‌ದೇವ್ ಅವಸರದಲ್ಲಿದ್ದರು. ಯಾಕೆ? ಮೈತುಂಬಾ ಬಟ್ಟೆ ಧರಿಸಿರುವ ಅಣ್ಣಾಹಜಾರೆ ಎದುರು ಅರೆಬೆತ್ತಲೆಯಾಗಿರುವ ಯೋಗಗುರುವನ್ನು ಕಾಡಿದ ಅಭದ್ರತೆಯಾದರೂ ಯಾವುದು? ಭ್ರಷ್ಟಾಚಾರದ ವಿರುದ್ಧದ ಹೋರಾಟದ ನಾಯಕತ್ವ ಕೈತಪ್ಪಿ ಹೋಗಬಹುದೆಂಬ ಹತಾಶೆಯಿಂದ ಅವರು ಪೈಪೋಟಿಗಿಳಿದರೇ?
ಮೂರನೆಯದು ಅವರ ಸ್ನೇಹಿತರ ಬಳಗ. ಒಬ್ಬ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಬೇಕಾದರೆ ಆತನ ಸ್ನೇಹಿತರ ಬಗ್ಗೆ ತಿಳಿದುಕೊಂಡರೆ ಸಾಕು ಎನ್ನುತ್ತಾರೆ. ಅಣ್ಣಾ ಹಜಾರೆ ಅವರ ಸ್ನೇಹಿತರು ಯಾರು ಎನ್ನುವುದು ಇಡೀ ದೇಶಕ್ಕೆ ಗೊತ್ತು. ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಹಿರಿಯ ವಕೀಲರಾದ ಶಾಂತಿಭೂಷಣ್ ಮತ್ತು ಪ್ರಶಾಂತ್ ಭೂಷಣ್, ಅರವಿಂದ ಕೇಜ್ರಿವಾಲಾ, ಕಿರಣ್‌ಬೇಡಿ, ಸ್ವಾಮಿ ಅಗ್ನಿವೇಶ್...ಇವರೆಲ್ಲ ದೇಶದ ಜನಕ್ಕೆ ಪರಿಚಿತರು.
ಆದರೆ ಬಾಬಾ ರಾಮ್‌ದೇವ್ ಸ್ನೇಹಿತರು ಯಾರು? ಅವರ‌್ಯಾಕೆ ಬಹಿರಂಗವಾಗಿ ಜತೆಯಲ್ಲಿ ಕಾಣಿಸುತ್ತಿಲ್ಲ. ಬಿಜೆಪಿಯ ಮಾಜಿ ಐಡಲಾಗ್ ಗೋವಿಂದಾಚಾರ್ಯ ಇಲ್ಲವೇ ಸಂಘ ಪರಿವಾರದ ಹಿತಚಿಂತಕ ಎಸ್.ಗುರುಮೂರ್ತಿ ಅವರು ಉಪವಾಸದ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿಲ್ಲ.
ಪ್ರಾಂತೀಯ ಸಂಚಾಲಕರಿಗೆ ಪತ್ರಬರೆದು ಬಾಬಾ ರಾಮ್‌ದೇವ್ ಉಪವಾಸದಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಿರುವ ಆರ್‌ಎಸ್‌ಎಸ್ ಸರಸಂಘಚಾಲಕರೂ ಕೂಡಾ ರಾಮ್‌ದೇವ್ ಅವರನ್ನು ಬೆಂಬಲಿಸಿ ಬೀದಿಗೆ ಇಳಿದಿಲ್ಲ. ಆದರೆ ಇದ್ದಕ್ಕಿದ್ದಂತೆಯೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿ ಸಾಧ್ವಿ ರಿತಂಬರ ಉಪವಾಸದ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.
ಅಣ್ಣಾಹಜಾರೆ ಅವರ ಕೆಲವು ಸಂಗಾತಿಗಳೂ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರಬಹುದು. ಆದರೆ ಅವರೆಲ್ಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವವರು, ಜನರ ಕಣ್ಣ ಮುಂದೆ ಇರುವವರು. ಅಣ್ಣಾ ಹಜಾರೆ ಅವರಿಗೆ ತನ್ನ ಸಂಗಡಿಗರ ಆಯ್ಕೆಯಲ್ಲಿ ಸ್ಪಷ್ಟತೆ ಇತ್ತು. ತಪ್ಪಾಗಿದ್ದನ್ನು ತಿದ್ದಿಕೊಳ್ಳುವ ವಿನಯವಂತಿಕೆಯೂ ಇತ್ತು (ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಬೆಂಬಲಿಸಿ ಮಾತನಾಡಿದ ಅವರು ಅಲ್ಲಿ ಹೋಗಿ ಕಣ್ಣಾರೆ ಕಂಡ ನಂತರ ನಿಲುವು ಬದಲಾಯಿಸಿದರು).

ಅವರು ಯಾವ ರಾಜಕಾರಣಿಯನ್ನೂ ಹತ್ತಿರ ಬಿಟ್ಟುಕೊಳ್ಳಲಿಲ್ಲ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರೇ ನಿರಾಶೆಯಿಂದ ಹಿಂದಿರುಗಿ ಹೋಗಬೇಕಾಯಿತು. ಆದರೆ ಬಾಬಾ ರಾಮ್‌ದೇವ್ ಅವರಿಗೆ ಒಂದೋ ತಮ್ಮ ಸಂಗಾತಿಗಳ ಆಯ್ಕೆ ಬಗ್ಗೆ ಸ್ಪಷ್ಟತೆ ಇಲ್ಲ, ಇಲ್ಲವೇ ಅವರಲ್ಲೊಂದು ರಹಸ್ಯ ಅಜೆಂಡಾ ಇದೆ. ಹೀಗೆ ಅಲ್ಲದೆ ಇದ್ದರೆ ಅವರು ಯಾಕೆ ತನ್ನನ್ನು ಬೆಂಬಲಿಸುತ್ತಿರುವ ಗಣ್ಯರನ್ನು ಬೆನ್ನಹಿಂದೆ ಬಚ್ಚಿಟ್ಟುಕೊಳ್ಳುತ್ತಿದ್ದಾರೆ?

ನಾಲ್ಕನೆಯದು ಸಂಘಪರಿವಾರದ ಜತೆಗಿನ ಸಂಬಂಧ. ಆರ್‌ಎಸ್‌ಎಸ್, ವಿಶ್ವಹಿಂದು ಪರಿಷತ್, ಬಿಜೆಪಿ ಇಲ್ಲವೇ ಸಂಘಪರಿವಾರಕ್ಕೆ ಸೇರಿರುವ ಇನ್ನಾವುದೋ ಸಂಘಟನೆಯ ಜತೆ  ಗುರುತಿಸಿಕೊಳ್ಳುವುದು ತಪ್ಪೇನಲ್ಲ. ಇವುಗಳಲ್ಲಿ ಯಾವುದೂ ದೇಶದ್ರೋಹದ ಆರೋಪವನ್ನು ಎದುರಿಸುತ್ತಿಲ್ಲ. ಇವುಗಳು ಭಯೋತ್ಪಾದಕ ಸಂಘಟನೆಗಳೂ ಅಲ್ಲ.
ಆದರೆ ಒಂದು ಸಂಘಟನೆಯ ಜತೆ ಗುರುತಿಸಿಕೊಂಡ ನಂತರ ಅದರ ಸಿದ್ದಾಂತದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆರ್‌ಎಸ್‌ಎಸ್ ಸಿದ್ಧಾಂತವನ್ನು ಬಾಬಾ ರಾಮ್‌ದೇವ್ ಒಪ್ಪುವುದಾಗಿದ್ದರೆ ಬಹಿರಂಗವಾಗಿ ಅದನ್ನು ಘೋಷಿಸಬೇಕಿತ್ತು.
ಆರ್‌ಎಸ್‌ಎಸ್ ತನ್ನ ಕಾರ‌್ಯಕ್ರಮಗಳಲ್ಲಿ ಒಬ್ಬ ಮೌಲ್ವಿಯನ್ನೋ, ಪಾದ್ರಿಯನ್ನೋ ವೇದಿಕೆಯಲ್ಲಿ ತಂದು ನಿಲ್ಲಿಸಿ ಭಾಷಣ ಮಾಡಿಸುವುದಿಲ್ಲ. ಅಷ್ಟರಮಟ್ಟಿಗೆ ಅದಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇದೆ. ಬಾಬಾ ರಾಮ್‌ದೇವ್ ಅವರಿಗೆ ಹಿಂದುತ್ವ ಬ್ರಿಗೇಡ್‌ನ ಬೆಂಬಲವೂ ಬೇಕು, ಜಾತ್ಯತೀತ ಎನ್ನುವು ಹಣೆಪಟ್ಟಿಯೂ ಬೇಕು. ಇದು ಹೇಗೆ ಸಾಧ್ಯ?
ಐದನೆಯದು ಅವರ ಆಸ್ತಿ. ಬಾಬಾ ರಾಮ್‌ದೇವ್ ಗಳಿಸಿರುವ ಆಸ್ತಿಯ ಮೊತ್ತ ಎಷ್ಟೆಂದು ಅವರಿಗಾದರೂ ನಿಖರವಾಗಿ ಗೊತ್ತಿದೆಯೋ ಇಲ್ಲವೋ? ಜನರ ಬಾಯಲ್ಲಿ ಈ ಲೆಕ್ಕಾಚಾರ ಒಂದು ಸಾವಿರ ಕೋಟಿಯಿಂದ ಹತ್ತುಸಾವಿರ ಕೋಟಿ ರೂಪಾಯಿಗಳ ವರೆಗೆ ಹರಿದಾಡುತ್ತಿದೆ. ಇವೆಲ್ಲವೂ ಕಳೆದ ಹದಿನೈದು ವರ್ಷಗಳ ಸಂಪಾದನೆ.

ದುಡ್ಡು ಸಂಪಾದನೆ ಮಾಡುವುದು ಅಪರಾಧ ಅಲ್ಲವೇ ಅಲ್ಲ. ಆದರೆ ದುಡ್ಡು ಗಳಿಸುವುದೇ ವೃತ್ತಿ ಮಾಡಿಕೊಂಡವರು ಸಮಾಜಸೇವಕ ಎಂದು ಅನಿಸಿಕೊಳ್ಳುವುದಿಲ್ಲ, ಆತನೊಬ್ಬ ವ್ಯಾಪಾರಿ ಅಷ್ಟೆ. ಆದರೆ ಬಾಬಾ ರಾಮ್‌ದೇವ್ ಅವರದು ದ್ವಿಪಾತ್ರ. ಅವರು ಯೋಗ ಶಿಬಿರ ಮತ್ತು ಔಷಧಿ ಮಾರಾಟದಿಂದಲೇ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಸಂಪಾದನೆ ಮಾಡುತ್ತಾರೆ.

ಸಾವಿರಾರು ಎಕರೆ ಜಮೀನು ಖರೀದಿಸಿದ್ದಾರೆ, ಖಾಸಗಿ ವಿಮಾನದಲ್ಲಿ ಓಡಾಡುತ್ತಾರೆ.ಪ್ರಾರಂಭದ ದಿನಗಳಲ್ಲಿ ಪವಾಡಗಳನ್ನು ಮಾಡುತ್ತಾ ವಿವಾದಕ್ಕೆ ಸಿಲುಕಿದ್ದ ಸತ್ಯಸಾಯಿಬಾಬಾ ಸಾಯುವ ಹೊತ್ತಿಗೆ ಎಲ್ಲರ ಅಭಿಮಾನಕ್ಕೆ ಪಾತ್ರವಾಗಿದ್ದು ಅವರು ಪ್ರಾರಂಭಿಸಿದ ಸಾಮಾಜಿಕ ಸೇವಾ ಕಾರ‌್ಯಗಳಿಂದಾಗಿ.
ಅಂತಹ ಯಾವುದೇ ಒಂದು ಯೋಜನೆಯನ್ನು ಬಾಬಾ ರಾಮ್‌ದೇವ್ ಪ್ರಾರಂಭಿಸಿದಂತಿಲ್ಲ. ತನ್ನದೆನ್ನುವುದನ್ನು ಏನನ್ನೂ ಇಟ್ಟುಕೊಳ್ಳದೆ ಫಕೀರನಂತೆ ಬದುಕುತ್ತಿರುವ ಅಣ್ಣಾ ಹಜಾರೆ ಜತೆಯಲ್ಲಿ ನಿಂತಿರುವ ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿರುವ ಬಾಬಾ ರಾಮ್‌ದೇವ್ ಅವರನ್ನು ಏನೆಂದು ಕರೆಯುವುದು?

ಸಮಾಜಸೇವಕನೆಂದೇ? ಸರ್ವಸಂಗ ಪರಿತ್ಯಾಗಿ ಬೈರಾಗಿಯೆಂದೇ?
ಕೊನೆಯದಾಗಿ ಅವರ ಎಡೆಬಿಡಂಗಿತನದ ಹೇಳಿಕೆಗಳು. ಅಣ್ಣಾ ಹಜಾರೆ ಅವರ ಉಪವಾಸ ಸತ್ಯಾಗ್ರಹಕ್ಕೆ ಮಣಿದು ಲೋಕಪಾಲ ಮಸೂದೆ ರಚನೆಗೆ ಸಮಿತಿ ರಚಿಸಿದಾಗ ಅದರಲ್ಲಿದ್ದ ನಾಗರಿಕ ಸಮಿತಿ ಸದಸ್ಯರ ಬಗ್ಗೆ ಮೊದಲು ಅಪಸ್ವರ ಎತ್ತಿದ್ದು ಬಾಬಾ ರಾಮ್‌ದೇವ್.

ಶಾಂತಿಭೂಷಣ್ ಮತ್ತು ಅವರ ಮಗ ಪ್ರಶಾಂತ್ ಭೂಷಣ್ ಇಬ್ಬರೂ ಸದಸ್ಯರಾಗಿದ್ದನ್ನು ಅವರು ಟೀಕಿಸಿದರು. ಒಂದೆಡೆ ಲೋಕಪಾಲ ಮಸೂದೆಯ ವ್ಯಾಪ್ತಿಯಲ್ಲಿ ಪ್ರಧಾನಿಯವರನ್ನೂ ಸೇರಿಸಲು ನಾಗರಿಕ ಸಮಿತಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ ಬಾಬಾ ರಾಮ್‌ದೇವ್ ಅದಕ್ಕೆ ವಿರುದ್ದವಾದ ಹೇಳಿಕೆ ನೀಡಿ ಸರ್ಕಾರದ ಬೆಂಬಲಕ್ಕೆ ನಿಂತರು. ಸಂವಿಧಾನದಿಂದ ಹಿಡಿದು ಸಲಿಂಗಕಾಮಿಗಳ ವರೆಗೆ ಅವರು ನೀಡಿರುವ ಹಲವಾರು ಹೇಳಿಕೆಗಳು ವಿವಾದ ಸೃಷ್ಟಿಸಿವೆ. ಇದು ಒಬ್ಬ ಸಮರ್ಥ ನಾಯಕನ ಲಕ್ಷಣ ಅಲ್ಲ.
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಮತದಾನವಷ್ಟೇ ರಹಸ್ಯ, ಉಳಿದೆಲ್ಲವೂ ಬಹಿರಂಗವಾಗಿ ನಡೆಯಬೇಕು. ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಈ ವ್ಯವಸ್ಥೆಯ ಜೀವಾಳ. ಜನರ ನಂಬಿಕೆ ಗಳಿಸಲು ಇದು ಅಗತ್ಯ. ಬಾಬಾ ರಾಮ್‌ದೇವ್ ಅವರ ನಡೆ-ನುಡಿಯಲ್ಲಿ ಇದರ ಕೊರತೆ ಇದೆ.

Monday, May 30, 2011

ಒಂದು ಕಲ್ಲಿಗೆ ಎರಡು ಹಕ್ಕಿ- ಇದು ಸುಷ್ಮಾ ತಂತ್ರ

`ದೈತ್ಯರ~ ನಿರ್ಗಮನವಾದ ನಂತರ `ಕುಬ್ಜ~ರ ಪಾಲಾದ ಭಾರತೀಯ ಜನತಾ ಪಕ್ಷದಲ್ಲಿ ಇಂತಹದ್ದೊಂದು `ಆಂತರಿಕ ಯುದ್ಧ~ ತೀರಾ ಅನಿರೀಕ್ಷಿತವಾದುದೇನಲ್ಲ.
ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕಿಯಾಗಿರುವ ಸುಷ್ಮಾ ಸ್ವರಾಜ್ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ಅರುಣ್ ಜೇಟ್ಲಿ ನಡುವೆ ಮುಸುಕಿನೊಳಗಿನ ಗುದ್ದಾಟ ಬಹಳ ದಿನಗಳಿಂದಲೇ ನಡೆಯುತ್ತಿತ್ತು, ಈಗ ಬೀದಿಗೆ ಬಂದಿದೆ.
ಸುಷ್ಮಾ ಸ್ವರಾಜ್ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನ ಮಾಡಿದ್ದಾರೆ. ಬಳ್ಳಾರಿಯ ರೆಡ್ಡಿ ಸೋದರರ ಜತೆಗೆ ತನಗೆ ಸಂಬಂಧ ಇಲ್ಲ ಎನ್ನುವುದನ್ನು ಹೊರಜಗತ್ತಿನ ಕಣ್ಣಿಗಾದರೂ ಅವರು ತೋರಿಸಿಕೊಳ್ಳಬೇಕಿತ್ತು, ಇದೇ ವೇಳೆ ಪಕ್ಷದೊಳಗೆ ತನ್ನ ಎದುರಾಳಿಯಾಗಿರುವ ಅರುಣ್ ಜೇಟ್ಲಿ ಮೈಮೇಲೆ ಒಂದಷ್ಟು ಕೆಸರು ಸಿಡಿಸಬೇಕಿತ್ತು. ಈ ಎರಡೂ ಕೆಲಸವನ್ನು ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಮಾಡಿ ಮುಗಿಸಿದ್ದಾರೆ.
ರೆಡ್ಡಿ ಸೋದರರ  ಮೇಲಿನ ಅಕ್ರಮ ಗಣಿಗಾರಿಕೆಯ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ನಡೆಸುತ್ತಿರುವ ವಿಚಾರಣೆಯ ಉರುಳು ದಿನದಿಂದ ದಿನಕ್ಕೆ ಬಿಗಿಗೊಳ್ಳುತ್ತಿದೆ. ಸಿಬಿಐ ಕೂಡಾ ಬೆನ್ನು ಹತ್ತಿದೆ.
ಇದೇ ಕಾಲಕ್ಕೆ ಸರಿಯಾಗಿ ಕರ್ನಾಟಕದ ಲೋಕಾಯುಕ್ತರು ಅಕ್ರಮ ಗಣಿಗಾರಿಕೆ ಬಗ್ಗೆ ಅಂತಿಮ ವರದಿ ಸಲ್ಲಿಸುವ ತಯಾರಿಯಲ್ಲಿದ್ದಾರೆ. ಅದರಲ್ಲೇನಾದರೂ ರೆಡ್ಡಿ ಸೋದರರು ಸಿಕ್ಕಿಹಾಕಿಕೊಂಡರೆ ಅವರ ಪಾಲಿಗೆ `ಅಮ್ಮ~ನಾಗಿರುವ ಸುಷ್ಮಾ ಸ್ವರಾಜ್ ಮೇಲೆ ಕಾಂಗ್ರೆಸ್ ಎರಗಿಬೀಳುವುದು ಖಂಡಿತ. ಅಂತಹ ಸಂದರ್ಭದಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಅವರು ಮುಜುಗರದ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು.
ಈ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ `ನಿರೀಕ್ಷಣಾ ಜಾಮೀನು~ ಪಡೆಯುವ ರೀತಿಯಲ್ಲಿ ರೆಡ್ಡಿ ಸೋದರರ ಜತೆಗಿನ ತಮ್ಮ ಸಂಬಂಧವನ್ನು ಕಡಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಹೆಚ್ಚು ಕಡಿಮೆ ಕಳೆದ 10-12 ವರ್ಷಗಳಿಂದ ಈ `ಅಮ್ಮ-ಮಕ್ಕಳ~ ಸಂಬಂಧ ನೋಡುತ್ತಾ ಬಂದವರು ಸುಲಭದಲ್ಲಿ ಸುಷ್ಮಾ ಅವರ ಬದಲಾದ ನುಡಿಯನ್ನು ಒಪ್ಪಲಾರರು.  ಆದರೆ ಆರೋಪ ಎದುರಾದ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಸುಷ್ಮಾ ಈ ಹೇಳಿಕೆಯನ್ನು ಬಳಸಿಕೊಳ್ಳಲು ಅಡ್ಡಿಯೇನು ಇಲ್ಲವಲ್ಲ?
ರೆಡ್ಡಿ ಸೋದರರ ಬಗ್ಗೆಯಷ್ಟೇ ಸುಷ್ಮಾ ಮಾತನಾಡಿದ್ದರೆ ಅದೇನು ದೊಡ್ಡ ಸುದ್ದಿಯಾಗುತ್ತಿರಲಿಲ್ಲ, ಆದರೆ ಅವರು ತನ್ನ ಬಿಚ್ಚುಮಾತುಗಳನ್ನು ಅಷ್ಟಕ್ಕೆ ನಿಲ್ಲಿಸದೆ ಅರುಣ್ ಜೇಟ್ಲಿ ಅವರನ್ನು ವಿವಾದದ ಮೈದಾನಕ್ಕೆ ಎಳೆದು ತಂದಿದ್ದಾರೆ. ಮೇಲ್ನೋಟಕ್ಕೆ ಇವರಿಬ್ಬರ ನಡುವಿನ ಸಂಘರ್ಷಕ್ಕೆ ಕಾರಣಗಳೇನು ಕಾಣುತ್ತಿಲ್ಲ.

ಸೋತ ರಾಜಕೀಯ ಪಕ್ಷದ ಪಾಲಿಗೆ ಇರುವ ಏಕೈಕ ಅಧಿಕಾರದ ಸ್ಥಾನ ವಿರೋಧಪಕ್ಷದ ನಾಯಕತ್ವ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿರುವ ಈ ಸ್ಥಾನಗಳನ್ನು ಸುಷ್ಮಾ ಮತ್ತು ಜೇಟ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಇಚ್ಚಿಸಿದರೂ ಒಬ್ಬರು ಮತ್ತೊಬ್ಬರ ಸ್ಥಾನವನ್ನು ಆಕ್ರಮಿಸಿಕೊಳ್ಳಲು ಸಾಧ್ಯ ಇಲ್ಲ. ಅದಕ್ಕಿಂತ ದೊಡ್ಡ ಸ್ಥಾನಕ್ಕೇರಬೇಕೆಂದರೂ ಅಲ್ಲಿ ಈಗ ಯಾವುದೂ ಇಲ್ಲ. ಹೀಗಿದ್ದರೂ ಸುಷ್ಮಾ ಸ್ವರಾಜ್ ಕಾಲು ಕೆರೆದು ಯಾಕೆ ಜಗಳಕ್ಕಿಳಿದಿದ್ದಾರೆ?
ಮುಂದಿನ ಲೋಕಸಭಾ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸೇನಾದರೂ ಅವರಿಗೆ ಬಿದ್ದಿದೆಯೇ? ಭ್ರಷ್ಟಾಚಾರದ ಹಗರಣಗಳಿಂದ ಮುಳುಗಿಹೋಗಿರುವ ಯುಪಿಎ ಜನಪ್ರಿಯತೆ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂತಹದ್ದೊಂದು ಕನಸು ಅವರಿಗೆ ಬಿದ್ದಿರಲೂ ಬಹುದು.
ಸುಷ್ಮಾ-ಜೇಟ್ಲಿ ಜಟಾಪಟಿ ಕೇವಲ ಅವರಿಬ್ಬರಿಗೆ ಸಂಬಂಧಿಸಿದ ವೈಯುಕ್ತಿಕ ವಿಷಯ ಅಲ್ಲ. ಅದರಲ್ಲಿ ಬಿಜೆಪಿಯ ಭವಿಷ್ಯದ ಬಿಕ್ಕಟ್ಟು ಕೂಡಾ ಅಡಗಿದೆ. ಬಿಜೆಪಿಯೊಳಗಿನ ನಾಯಕರ ನಡುವಿನ ತಿಕ್ಕಾಟ ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲಿನೊಂದಿಗೆ ಪ್ರಾರಂಭವಾಗಿತ್ತು. ಆ ಸೋಲು ಕಾಂಗ್ರೆಸ್‌ಪಕ್ಷಕ್ಕಿಂತ ಕೇವಲ 22 ಸ್ಥಾನಗಳು ಮತ್ತು ಶೇಕಡಾ 2.87ರಷ್ಟು ಮತಗಳನ್ನು ಕಡಿಮೆ ಪಡೆದುದಷ್ಟೇ ಅಲ್ಲ, ಅದಕ್ಕಿಂತಲೂ ದೊಡ್ಡದು.
ಯಾಕೆಂದರೆ ಸೋಲಿನ ಕಾಲಕ್ಕೆ ಸರಿಯಾಗಿ ಕಳೆದ 60 ವರ್ಷಗಳಲ್ಲಿ ಪಕ್ಷವನ್ನು (ಮೊದಲು ಜನಸಂಘ, ನಂತರ ಬಿಜೆಪಿ) ಕಟ್ಟಿ ಬೆಳೆಸಿ ಮುನ್ನಡೆಸಿದ್ದ ಇಬ್ಬರು ದೈತ್ಯ ನಾಯಕರಲ್ಲಿ ಒಬ್ಬರಾದ ಅಟಲಬಿಹಾರಿ ವಾಜಪೇಯಿ ರಾಜಕೀಯದಿಂದ ನಿವೃತ್ತಿಯಾದರು.
ಮತ್ತೊಬ್ಬ ನಾಯಕರಾದ ಲಾಲ್‌ಕೃಷ್ಣ ಅಡ್ವಾಣಿಯವರು  ಒಂದಷ್ಟು ದಿನ ವಿರೋಧಪಕ್ಷದ ನಾಯಕರಾಗಿ ಮುಂದುವರಿದರೂ ಕೊನೆಗೂ ಆ ಸ್ಥಾನವನ್ನು ಬಿಟ್ಟುಕೊಟ್ಟು ಪಕ್ಕಕ್ಕೆ ಸರಿಯಬೇಕಾಯಿತು. ಬಿಜೆಪಿಯನ್ನು ಬೆಂಬಲಿಸುತ್ತಾ ಬಂದ ಮತದಾರರು ಈ ಎರಡು ಜನಪ್ರಿಯ ಮುಖಗಳನ್ನು ಮರೆತು ಆ ಪಕ್ಷವನ್ನು ಕಲ್ಪಿಸಿಕೊಳ್ಳುವುದು ಕೂಡಾ ಕಷ್ಟ.
ಇದರ ಜತೆಯಲ್ಲಿಯೇ ಇವರಿಬ್ಬರ ಉತ್ತರಾಧಿಕಾರಿಯೆಂದು ವಾಜಪೇಯಿ ಅವರಿಂದಲೇ ಘೋಷಿಸಲ್ಪಟ್ಟ ಪ್ರಮೋದ್ ಮಹಾಜನ್ ಕೂಡಾ ಅಕಾಲ ಸಾವಿಗೀಡಾದರು. ಈ ರೀತಿ ಮೊದಲ ಸಾಲಿನ ಮೂವರು ನಾಯಕರನ್ನು ಕೆಲವೇ ವರ್ಷಗಳ ಅವಧಿಯಲ್ಲಿ ಬಿಜೆಪಿ ಕಳೆದುಕೊಳ್ಳುವಂತಾಯಿತು.
ಯಾವಾಗಲೂ ಸೋತಪಕ್ಷಗಳ ಮುಂದಿರುವುದು ಯುದ್ಧಕಾಲ, ವಿಶ್ರಾಂತಿಯದ್ದಲ್ಲ.ಎರಡು ಸ್ಥಾನಗಳಷ್ಟೆ ಗಳಿಸಿದ 1984ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ಬಹುಎತ್ತರಕ್ಕೆ ಬೆಳೆಯಿತೆನ್ನುವುದು ನಿಜ.

ಆದರೆ ಆ ಕಾಲದಲ್ಲಿ ಪಕ್ಷವನ್ನು ಮುನ್ನಡೆಸಲು ಅಟಲಬಿಹಾರಿ ವಾಜಪೇಯಿ ಮತ್ತು ಲಾಲ್‌ಕೃಷ್ಣ ಅಡ್ವಾಣಿಯವರಂತಹ ಸೇನಾಪತಿಗಳಿದ್ದರು. ಜತೆಗೆ ಕ್ಷಣಾರ್ಧದಲ್ಲಿ ಯುದ್ಧದ ದಿಕ್ಕನ್ನೇ ಬದಲಿಸಬಲ್ಲ `ಹಿಂದುತ್ವ~ ಎಂಬ ಸ್ಪೋಟಕ ಅಜೆಂಡಾ ಇತ್ತು.
ಸೈನಿಕರಂತೆ ನಿಸ್ವಾರ್ಥದಿಂದ ದುಡಿಯಬಲ್ಲ ಪರಿವಾರದ ಸದಸ್ಯರಿದ್ದರು. ಅಡ್ವಾಣಿ ಅವುಗಳನ್ನೆಲ್ಲ ಜಾಣ್ಮೆ ಮತ್ತು ಪರಿಶ್ರಮದಿಂದ ಬಳಸಿಕೊಂಡರು. ಅದರ ಫಲವೇ 1998ರಲ್ಲಿ ಸಿಕ್ಕ ಅತ್ಯುತ್ತಮ ಫಲಿತಾಂಶ- 182 ಸ್ಥಾನ ಮತ್ತು ಶೇಕಡಾ 25.59ರಷ್ಟು ಮತ. ಅದು ಬಿಜೆಪಿಯ ಶಿಖರ ಸಾಧನೆ.
ಆದರೆ ಈಗ ಆ ನಾಯಕರು ಮರೆಗೆ ಸರಿದಿದ್ದಾರೆ, ಅಧಿಕಾರದಲ್ಲಿದ್ದ ದಿನಗಳಲ್ಲಿನ ಪಕ್ಷದ ಆತ್ಮವಂಚನೆಯ ರಾಜಕೀಯದಿಂದಾಗಿ `ಹಿಂದುತ್ವ~ ಅಜೆಂಡಾ ತನ್ನ ಸ್ಪೋಟಕ ಗುಣವನ್ನು ಕಳೆದುಕೊಂಡಿದೆ. `ವಲಸೆ ಬಂದವರ~ ಪ್ರವಾಹದಲ್ಲಿ ಪಕ್ಷದ ನಿಷ್ಠಾವಂತ ಕಾರ‌್ಯಕರ್ತರು ಕೊಚ್ಚಿಕೊಂಡು ಹೋಗುತ್ತಿದ್ದಾರೆ.

ಇಂತಹ ಕಾಲದಲ್ಲಿ ಹೊಸಕಾಲ ಮತ್ತು ಹೊಸ ಜನಾಂಗದ ಆಶೋತ್ತರಗಳಿಗೆ ತಕ್ಕಂತೆ ಪಕ್ಷವನ್ನು ಮುರಿದುಕಟ್ಟುವ ನಾಯಕತ್ವ ಬಿಜೆಪಿಯ ಇಂದಿನ ಅಗತ್ಯ. ಇಂತಹ ಕಾಲದಲ್ಲಿ ಬಿಜೆಪಿಯ ಹಳೆಯ ಸೇನಾಪತಿಗಳು ರಣರಂಗದಿಂದ ನಿರ್ಗಮಿಸಿದ್ದಾರೆ, ಹೊಸಬರು ಬೀದಿ ಜಗಳಕ್ಕೆ ಇಳಿದಿದ್ದಾರೆ.
ವಾಜಪೇಯಿ, ಅಡ್ವಾಣಿ ಮತ್ತು ಮಹಾಜನ್ ಇವರಲ್ಲಿ ಒಬ್ಬರಿದ್ದರೂ ಬಿಜೆಪಿ ಸ್ಥಿತಿ ಇಂದಿನಷ್ಟು ಶೋಚನೀಯವಾಗಿ ಇರುತ್ತಿರಲಿಲ್ಲ. ಇನ್ನೊಂದು ರೀತಿಯಲ್ಲಿ ಇದು ಭವಿಷ್ಯದ ನಾಯಕರನ್ನು ಬೆಳೆಸಲಾಗದ ಹಿರಿಯರ ವೈಫಲ್ಯವೂ ಹೌದು.
ಈಗ ಉಳಿದಿರುವವರು ನರೇಂದ್ರಮೋದಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ರಾಜನಾಥ್‌ಸಿಂಗ್, ಮುರಳಿಮನೋಹರ ಜೋಷಿ, ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು, ಅನಂತಕುಮಾರ್ ಮೊದಲಾದವರು. ಇವರಲ್ಲಿ ಜನಪ್ರಿಯತೆಯಲ್ಲಿ ಎಲ್ಲರಿಗಿಂತಲೂ ಮುಂದೆ ಇರುವವರು ನರೇಂದ್ರಮೋದಿ.

ಆದರೆ ಆಗಲೇ ನ್ಯಾಯಾಲಯದಲ್ಲಿನ ಮೊಕದ್ದಮೆಗಳು, ಸಿಬಿಐ ತನಿಖೆ ಮತ್ತು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಮೋದಿ, ಮುಂದಿನ ದಿನಗಳಲ್ಲಿ ತನ್ನ ತಲೆ ಉಳಿಸಿಕೊಂಡರೆ ಸಾಕಾಗಿದೆ.
ಒಂದೊಮ್ಮೆ ಅವರು ಉಳಿದುಕೊಂಡರೂ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವಷ್ಟು ಬಹುಮತ ಗಳಿಸಿದರೆ ಮಾತ್ರ ಮೋದಿ ನಾಯಕತ್ವ ವಹಿಸಲು ಸಾಧ್ಯ.ಉಗ್ರಹಿಂದೂವಾದದ ಅವರ ಹಿನ್ನೆಲೆಯಿಂದಾಗಿ ಮೈತ್ರಿಕೂಟದ ನಾಯಕರಾಗುವುದು ಅವರಿಂದ ಸಾಧ್ಯವಾಗದು. ಬೇರೆ ಪಕ್ಷಗಳು ಮೋದಿ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದೆ ಬರಲಾರವು.
ರಾಜನಾಥ್‌ಸಿಂಗ್ ಅವರಲ್ಲಿ ಮಹತ್ವಾಕಾಂಕ್ಷೆ ಇದ್ದರೂ ಉತ್ತರಪ್ರದೇಶದಲ್ಲಿಯೇ ಅವರನ್ನು ಕೇಳುವವರಿಲ್ಲ. ಉತ್ತಮ ಸಂಘಟಕ ಇಲ್ಲವೇ ಆಡಳಿತಗಾರನೆಂದೂ ಅವರು ಹೆಸರು ಪಡೆದಿಲ್ಲ. ಆರ್‌ಎಸ್‌ಎಸ್ ಬೆಂಬಲ ಇದ್ದರೂ ರಾಷ್ಟ್ರೀಯ ನಾಯಕನಾಗಲು ಬೇಕಾದ ರಾಷ್ಟ್ರಮಟ್ಟದ ಜನಪ್ರಿಯತೆ ಅವರಿಗಿಲ್ಲ.
ಮುರಳಿಮನೋಹರ ಜೋಷಿ ಅವರು ಆರ್‌ಎಸ್‌ಎಸ್ ಕಣ್ಮಣಿ. ವಾಜಪೇಯಿ ಮತ್ತು ಅಡ್ವಾಣಿ ನಾಯಕತ್ವದ ನಂತರ `ಮೂರನೇ ಶಕ್ತಿ~ಯಾಗಿ ತಮ್ಮನ್ನು ಬಿಂಬಿಸಿಕೊಳ್ಳಲು ಅವರು ಎನ್‌ಡಿಎ ಅಧಿಕಾರವಧಿಯಲ್ಲಿ ಪ್ರಯತ್ನಪಟ್ಟು ವಿಫಲಗೊಂಡವರು. ವಯಸ್ಸು ಕೂಡಾ ಅವರ ಪರವಾಗಿಲ್ಲ.
ಬಿಜೆಪಿ ಈ ವರೆಗೆ ಕಂಡ ಅತ್ಯಂತ ದುರ್ಬಲ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ.ಆರ್‌ಎಸ್‌ಎಸ್ ಅವರನ್ನು ಎಷ್ಟೇ ಎತ್ತಿಹಿಡಿದರೂ ಎತ್ತರದ ಸ್ಥಾನದಲ್ಲಿ ಅವರನ್ನು ಆ ಪಕ್ಷದ ಅಭಿಮಾನಿಗಳು ಕೂಡಾ ಕಲ್ಪಿಸಿಕೊಳ್ಳಲಾರರು. ವೆಂಕಯ್ಯನಾಯ್ಡು ಅವರ ಶಕ್ತಿ ಎಂದರೆ ದೊಡ್ಡ ಬಾಯಿ. ತನ್ನ ರಾಜ್ಯದಲ್ಲಿಯೇ ನೆಲೆ ಇಲ್ಲದ ನಾಯ್ಡು, ಅವಧಿಗೆ ಮುನ್ನವೇ ನಿವೃತ್ತಿಯ ಅಂಚಿನಲ್ಲಿರುವವರು.

ಲಾಲ್‌ಕೃಷ್ಣ ಅಡ್ವಾಣಿ ಅವರ ಅಖಂಡ ಬೆಂಬಲದ ಹೊರತಾಗಿಯೂ ಸಂಸತ್‌ನ ಒಳಗೆ ಇಲ್ಲವೇ ಹೊರಗೆ ಒಬ್ಬ ಸಮರ್ಥನಾಯಕನಾಗಿ ಅನಂತಕುಮಾರ್ ತಮ್ಮನ್ನು ರೂಪಿಸಿಕೊಳ್ಳಲೇ ಇಲ್ಲ. ಇದರಿಂದಾಗಿ ಪಕ್ಷದಲ್ಲಿಯೇ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಉಳಿದಿರುವವರು ಇಬ್ಬರು- ಅರುಣ್ ಜೇಟ್ಲಿ ಮತ್ತು ಸುಷ್ಮಾ ಸ್ವರಾಜ್. ಆರ್‌ಎಸ್‌ಎಸ್ ಹಿನ್ನೆಲೆ ಇಲ್ಲದೆ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ ಮೊದಲ ನಾಯಕಿ ಸುಷ್ಮಾ. ಸಂಘ ಪರಿವಾರದ ಪೂರ್ಣಬೆಂಬಲ ಅವರಿಗೆ ಈಗಲೂ ಇಲ್ಲ. ಈ ಕಾರಣದಿಂದಾಗಿಯೇ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಅವಕಾಶವನ್ನು ಕಳೆದುಕೊಂಡಿರುವುದು.
ಸುಷ್ಮಾ ಬುದ್ದಿವಂತ ಮಹಿಳೆ,ಆದರೆ ಅವರು ಶತ್ರುವನ್ನು ನಾಲಿಗೆಯಲ್ಲಿಯೇ ಇಟ್ಟುಕೊಂಡಿದ್ದಾರೆ. `ಸೋನಿಯಾಗಾಂಧಿ ಪ್ರಧಾನಿಯಾದರೆ ತಲೆಬೋಳಿಸಿಕೊಳ್ಳುತ್ತೇನೆ~ ಎಂದು ಕೇವಲ ಪ್ರಚಾರಕ್ಕಾಗಿ ಹೇಳಿ ಜನರ ಕಣ್ಣಿನಲ್ಲಿ ಅಗ್ಗವಾದವರು ಸುಷ್ಮಾ.
ಈಗಲೂ ಅವರು ಲೋಕಸಭೆಯಲ್ಲಿ ಮಾತನಾಡಿದರೆ ಬೆಳಕಿಗಿಂತ ಶಾಖವೇ ಹೆಚ್ಚು.ಸುಷ್ಮಾ ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕಿಯಾಗಿದ್ದು ಕೂಡಾ ಅನಿವಾರ‌್ಯವಾಗಿ ಸೃಷ್ಟಿಯಾದ ಅವಕಾಶದಿಂದಾಗಿ.ಜಸ್ವಂತ್‌ಸಿಂಗ್ ಆಗಲೇ ಪಕ್ಷದಿಂದ ಹೊರಟುಹೋಗಿದ್ದರು, ಮುರಳಿಮನೋಹರ ಜೋಷಿ ಅವರಿಗೆ ವಯಸ್ಸು ಅಡ್ಡಿಯಾಗಿತ್ತು. ಅನಂತಕುಮಾರ್ ನಾಯಕತ್ವದ ಮೇಲೆ ಅವರ ಪಕ್ಷದಲ್ಲಿಯೇ ವಿಶ್ವಾಸ ಇರಲಿಲ್ಲ. ಹೀಗಾಗಿ ಸುಷ್ಮಾ ಅನಿವಾರ‌್ಯವಾದರು.

ಅಧಿಕಾರದ ಸ್ಥಾನವೇ ಹಾಗೆ, ಅಲ್ಲಿ ಕೂತವನನ್ನು ಮಹತ್ವಾಕಾಂಕ್ಷಿಯನ್ನಾಗಿ ಮಾಡುತ್ತದೆ. ಆಗ ಕಣ್ಣೆದುರಿಗೆ ಕಾಣುವ ಎದುರಾಳಿಗಳನ್ನು ಹಣಿದುಹಾಕಲು ಮನಸ್ಸು ಹೊಂಚುಹಾಕುತ್ತಿರುತ್ತದೆ. ಹಿಂದೆ ಅರುಣ್ ಜೇಟ್ಲಿ ಸ್ನೇಹಿತರಾದ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ವಿರುದ್ಧ ಟೀಕಾಪ್ರಹಾರ ಮಾಡಿದ್ದ ಸುಷ್ಮಾ ಈಗ ಜೇಟ್ಲಿ ಕಡೆ ಬಾಣ ಬಿಟ್ಟಿದ್ದಾರೆ.
ಜೇಟ್ಲಿ ಎಂದೂ ನೇರಚುನಾವಣೆ ಎದುರಿಸಿದವರಲ್ಲ, ಇದರಿಂದಾಗಿ ಅವರಿಗೆ ನಿಶ್ಚಿತ ನೆಲೆ ಎಂಬುದಿಲ್ಲ. ಸಾಮಾನ್ಯ ಕಾರ‌್ಯಕರ್ತರ ಜತೆ ಅವರ ಸಂಪರ್ಕ ಅಷ್ಟಕಷ್ಟೇ.
ಸೂತ್ರಧಾರರಾಗಿಯೇ ಯಶಸ್ಸು ಗಳಿಸಿರುವ ಅವರು ಪಾತ್ರಧಾರಿಯಾಗಿ ಜನಪ್ರಿಯರಾಗಿಲ್ಲ. ಆದರೆ ಜೇಟ್ಲಿ ಎಬಿವಿಪಿ ಮೂಲಕ ರಾಜಕೀಯ ಪ್ರವೇಶಿಸಿದವರು.
ಇದರಿಂದಾಗಿ ಸಂಘಪರಿವಾರದ ಬೆಂಬಲ ಇದೆ. ವೃತ್ತಿಯಲ್ಲಿ ಯಶಸ್ವಿ ವಕೀಲ, ರಾಜಕೀಯ ತಂತ್ರಗಳನ್ನು ಹೆಣೆಯುವುದರಲ್ಲಿ ಮಾತ್ರವಲ್ಲ ಎಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಪಕ್ಷವನ್ನು ಸಮರ್ಥಿಸಿಕೊಳ್ಳಬಲ್ಲ ಸಾಮರ್ಥ್ಯ ಹೊಂದಿದವರು.
ಇವೆಲ್ಲಕ್ಕಿಂತಲೂ ಮೇಲಾಗಿ ಕೈ-ಬಾಯಿ ಸ್ವಚ್ಚವಾಗಿಟ್ಟುಕೊಂಡ ಕ್ಲೀನ್ ಇಮೇಜ್ ಜೇಟ್ಲಿಯವರಿಗಿದೆ. ಸುಷ್ಮಾ ಸ್ವರಾಜ್ ನಾಯಕತ್ವದ ಸಾಮರ್ಥ್ಯ ಹೊಂದಿರುವ ಮಹಿಳೆ.ಆದರೆ ರೆಡ್ಡಿ ಸೋದರರ ತಲೆ ಮೇಲೆ ಕೈ ಇಟ್ಟ ನಂತರ ಅದು ಮಲಿನಗೊಂಡಿದೆ.
ಇದರಿಂದಾಗಿಯೇ ನಾಯಕತ್ವದ ಓಟದಲ್ಲಿ ಜೇಟ್ಲಿ ಒಂದು ಹೆಜ್ಜೆ ಮುಂದಿದ್ದಾರೆ. ಹಿಂದೆ ಉಳಿದವರಿಗೆ ಮುಂದೆ ಹೋದವರನ್ನು ಹಿಂದಕ್ಕೆ ತಳ್ಳಲು ಇರುವ ಏಕೈಕ ದಾರಿ ಎಂದರೆ ಕಾಲೆಳೆದು ಬೀಳಿಸುವುದು. ಸುಷ್ಮಾ ಆ ಪ್ರಯತ್ನವನ್ನೇ ಮಾಡಿರುವುದು.

Monday, May 23, 2011

ಮುಖಭಂಗ ಮಾಡಿಸಿಕೊಂಡ ರಾಜ್ಯಪಾಲ ಭಾರದ್ವಾಜ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮತ್ತೊಂದು ಬಾರಿ ಜೀವದಾನ ಪಡೆದಿದ್ದಾರೆ. ರಾಜ್ಯದ ವಿಧಾನಸಭೆಯನ್ನು ಅಮಾನತ್‌ನಲ್ಲಿರಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂಬ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. `ರಾಷ್ಟ್ರಪತಿ ಆಳ್ವಿಕೆ ಎನ್ನುವುದು ಸಂವಿಧಾನದತ್ತ ಅಧಿಕಾರ ಹೊಂದಿರುವ ವ್ಯಕ್ತಿಗಳು ಮಾತ್ರ ತೀರ್ಮಾನಿಸಬೇಕಾದ ವಿಚಾರ, ಹಾದಿಬೀದಿಯಲ್ಲಿ ಬಗೆಹರಿಸುವಂತಹದ್ದಲ್ಲ~ ಎಂದು ರಾಜ್ಯಪಾಲ ಎಚ್.ಆರ.ಭಾರದ್ವಾಜ  ಅವರು ಕಳೆದ ವಾರ ಹಠಾತ್ ಜ್ಞಾನೋದಯವಾದವರಂತೆ ಹೇಳಿದ್ದರು.  ಈ ಸಾಮಾನ್ಯ ಜ್ಞಾನದಂತೆ ಅವರು ನಡೆದುಕೊಂಡಿದ್ದರೆ ಮುಜುಗರಪಟ್ಟುಕೊಳ್ಳಬೇಕಾದ ಇಂದಿನ ಪರಿಸ್ಥಿತಿಯನ್ನು ಅವರು ಎದುರಿಸುತ್ತಿರಲಿಲ್ಲವೇನೋ? ಆದರೆ ಭಾರದ್ವಾಜರ ಕತೆ ` ತೋಳ ಬಂತು ತೋಳ~ ಎಂದು ಸುಳ್ಳುಸುಳ್ಳೇ ಕೂಗುತ್ತಾ ಊರಜನರನ್ನು ಮೋಸಮಾಡುತ್ತಿದ್ದ ಹೊಲಕಾಯುವ ಹುಡುಗನಂತಾಗಿದೆ. ನಿಜವಾಗಿ ತೋಳ ಬಂದಾಗ ಆ ಹುಡುಗನ ಕೂಗಿಗೆ ಯಾರೂ ಓಗೊಡಲೇ ಇಲ್ಲವಂತೆ. ಭಾರದ್ವಾಜರದ್ದೂ ಅದೇ ಸ್ಥಿತಿ.
`ಮುಖ್ಯಮಂತ್ರಿ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿ ರಾಜ್ಯಪಾಲರಿಗೆ ಪತ್ರ ನೀಡಿದ್ದ ಹದಿನಾರು ಭಿನ್ನಮತೀಯ ಶಾಸಕರು  ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದರೆ ಸರ್ಕಾರ ಪತನಗೊಳ್ಳುತ್ತಿತ್ತು. ಅವರನ್ನು ಕಲಾಪದಲ್ಲಿ ಭಾಗವಹಿಸದಂತೆ ಮಾಡಿರುವುದು ಅವರನ್ನು ಅನರ್ಹತೆಗೊಳಿಸಿದ್ದ ಸ್ಪೀಕರ್ ಆದೇಶ. ಈ ಆದೇಶ ಅಕ್ರಮ ಎಂದು ಸಾರಿ ಸುಪ್ರೀಂಕೋರ್ಟ್ ರದ್ದುಮಾಡಿದೆ. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪನವರು ಸಾಬೀತುಪಡಿಸಿದ್ದ ಬಹುಮತ ಕೂಡಾ ಅಕ್ರಮ~ ಎನ್ನುವುದು ರಾಜ್ಯಪಾಲರ ಸರಳವಾದ ವಾದ. ಸುಪ್ರೀಂಕೋರ್ಟ್ ತೀರ್ಪನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಪಾಲರು ದಾಳ ಉರುಳಿಸಿದ್ದರು. ಅನಿವಾರ‌್ಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಕೂಡಾ ತಮ್ಮ ನಿರ್ಧಾರವನ್ನು ಸಮರ್ಥಿಸಬಹುದು ಎನ್ನುವ ನಿರೀಕ್ಷೆ ಭಾರದ್ವಾಜರಲ್ಲಿ ಇತ್ತೋ ಏನೋ? ಕೇಂದ್ರ ಸರ್ಕಾರ ಅವರ ಶಿಫಾರಸನ್ನು ಒಪ್ಪಿಕೊಂಡಿದ್ದರೆ ಪ್ರಕರಣ ಖಂಡಿತ ನ್ಯಾಯಾಲಯದ ಮೆಟ್ಟಿಲೇರುತ್ತಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅವಕಾಶವನ್ನೇ ನೀಡಿಲ್ಲ. ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರದ ಹಿನ್ನೆಲೆಯಲ್ಲಿಯೂ ಕಾನೂನಿನ ಆಧಾರದಲ್ಲಿ ಮಾಡಿರುವ ವಿಮರ್ಶೆಗಿಂತ   ರಾಜಕೀಯ ಕೋನದಿಂದ ಮಾಡಿದ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸಿದಂತೆ ತೋರುತ್ತಿದೆ. ವಿವಾದಾತ್ಮಕವಾದ ಸಂವಿಧಾನದ 356ನೇ ಪರಿಚ್ಚೇದದ ಬಳಕೆಗೆ ಸಾರ್ವತ್ರಿಕವಾದ ಜನವಿರೋಧ ಮತ್ತು ಈ ವಿಷಯದಲ್ಲಿ ಬಹುಸೂಕ್ಷ್ಮವಾಗಿರುವ ಸುಪ್ರೀಂಕೋರ್ಟ್ ನಿಲುವಿಗೆ ಕೇಂದ್ರ ಸರ್ಕಾರ ಹೆದರಿದಂತೆ ಕಾಣುತ್ತಿದೆ.
ರಾಜ್ಯಪಾಲ ಎಚ್.ಆರ್.ಭಾರದ್ವಾಜ ಅವರಿಗೆ ಇದು ಎರಡನೇ ಮುಖಭಂಗ. ಇದಕ್ಕೆ ಬಹುಮಟ್ಟಿಗೆ ಅವರೂ ಜವಾಬ್ದಾರಿ. ಕರ್ನಾಟಕದ ರಾಜಭವನ ಪ್ರವೇಶ ಮಾಡಿದ ದಿನದಿಂದ ಇಲ್ಲಿಯ ವರೆಗೆ ರಾಜ್ಯಪಾಲರು ನೂರಾರು ಸಭೆ-ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲೆಲ್ಲಾ ಅವರು ಸಂದರ್ಭದ ಔಚಿತ್ಯವನ್ನು ಮರೆತು ರಾಜಕೀಯ ಮಾತನಾಡಿದ್ದೇ ಹೆಚ್ಚು. ಅವರನ್ನು ಕೆಣಕಲೆಂದೇ ಪತ್ರಕರ್ತರು ರಾಜ್ಯಸರ್ಕಾರದ ಬಗ್ಗೆ ಪ್ರಶ್ನಿಸುತ್ತಾರೆ. ತಕ್ಷಣ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ದ ಸಿಡಿಯುತ್ತಾ ಬೋನಿಗೆ ಬೀಳುತ್ತಾರೆ. ಇಷ್ಟೇ ಅಲ್ಲ, ಕಾಂಗ್ರೆಸ್-ಜೆಡಿ (ಎಸ್) ನಾಯಕರು ಭೇಟಿಯಾಗಲು ಬಂದರೆ ಕೈಹಿಡಿದು ರಾಜಭವನದೊಳಗೆ ಕರೆದೊಯ್ಯುವ ಭಾರದ್ವಾಜರು, ಬಿಜೆಪಿ ನಾಯಕರು ಹೊರಗಿನ ಬಾಗಿಲು ಕಾಯುವಂತೆ ಮಾಡುತ್ತಾರೆ, ಇಲ್ಲವೇ ಭೇಟಿಗೆ ಅನುಮತಿ ನಿರಾಕರಿಸುತ್ತಾರೆ. ಶಿಷ್ಟಾಚಾರವನ್ನು ಉಲ್ಲಂಘಿಸಿದ  ಈ ನಡವಳಿಕೆಯಿಂದಾಗಿಯೇ ಸಂವಿಧಾನಬದ್ದವೆಂದು ಸಮರ್ಥಿಸಿಕೊಳ್ಳುತ್ತಿದ್ದ ಅವರ ಕೈಗೊಂಡ ಕ್ರಮವನ್ನು ಜನತೆ ಸಂಶಯದಿಂದ ನೋಡುವಂತಾಗಿದ್ದು. ಈ ಜನಾಪ್ರಾಯವೇ ಕೇಂದ್ರ ಸರ್ಕಾರದ ಕೈಗಳನ್ನೂ ಕಟ್ಟಿಹಾಕಿರುವುದು.
 ಜನತೆಯಲ್ಲಿನ ಇಂತಹ ಸಂಶಯಕ್ಕೆ ಎಚ್.ಆರ್.ಭಾರದ್ವಾಜರ ನಡೆ-ನುಡಿಯೊಂದೇ ಕಾರಣ ಅಲ್ಲ, ಬೇರೆ ಐತಿಹಾಸಿಕವಾದ ಕಾರಣಗಳೂ ಇವೆ. ರಾಜ್ಯಪಾಲ ಎಂದಾಕ್ಷಣ ಜನರ ಕಣ್ಣಮುಂದೆ  1952ರಲ್ಲಿ ಕೇರಳ ವಿಧಾನಸಭೆಯಲ್ಲಿ ಅಲ್ಪಬಹುಮತಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಿದ್ದ ರಾಜ್ಯಪಾಲ ಶ್ರೀ ಪ್ರಕಾಶಂ ಅವರಿಂದ  ಹಿಡಿದು ವೆಂಕಟಸುಬ್ಬಯ್ಯ, ನಾಂದೇಡ್ಲ ಭಾಸ್ಕರರಾವ್,ಜಗಮೋಹನ್ ಬೂಟಾಸಿಂಗ್, ಸೈಯ್ಯದ್ ರಜ್ವಿ ವರೆಗೆ ಹಲವು ರಾಜ್ಯಪಾಲರು ಹಾದುಹೋಗುತ್ತಾರೆ.ಬಹುಮತ ಹೊಂದಿದ್ದ ಸರ್ಕಾರಗಳನ್ನು ಉರುಳಿಸಲು ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಮಾಡಿಕೊಂಡ ಹಲವಾರು ಪ್ರಕರಣಗಳು ನೆನೆಪಾಗುತ್ತವೆ. ಇದನ್ನು ಪ್ರಾರಂಭಿಸಿದ್ದು ಕಾಂಗ್ರೆಸ್ ಪಕ್ಷವಾದರೂ ಅವಕಾಶ ಸಿಕ್ಕಿದಾಗ ಅದನ್ನು ಮುಂದುವರಿಸಿಕೊಂಡು ಹೋಗಲು ಉಳಿದ ಪಕ್ಷಗಳು ಕೂಡಾ ಹಿಂಜರಿಯಲಿಲ್ಲ. ಮೊದಲ ಬಾರಿಗೆ 1977ರಲ್ಲಿ ಜನತಾ ಪಕ್ಷ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ ಆಡಳಿತದ ಒಂಬತ್ತು ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಹೇರಿತ್ತು. ಎನ್‌ಡಿಎ ಕಾಲದಲ್ಲಿ ಚುನಾವಣೆ ಮೂಲಕ ಬಿಹಾರದಲ್ಲಿ ಅಧಿಕಾರಕ್ಕೆ ಬರುವುದು ಸಾಧ್ಯವಾಗದೆ ಇದ್ದಾಗ ಸಮತಾ ಪಕ್ಷದ ನಾಯಕ ಜಾರ್ಜ್ ಫರ್ನಾಂಡಿಸ್ ಎರಡು ಬಾರಿ ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸಿದ್ದರು. ಅದರ ನಂತರ ಮಮತಾ ಬ್ಯಾನರ್ಜಿ ಒತ್ತಡಕ್ಕೆ ಸಿಕ್ಕಿ ಪಶ್ಚಿಮಬಂಗಾಳದಲ್ಲಿಯೂ ಅವರು ಈ ಪ್ರಯತ್ನ ನಡೆಸಿದ್ದರು.
ಸಂವಿಧಾನ ರಚನಾ ಸಭೆಯಲ್ಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು `ಅತ್ಯಂತ ಅನಿವಾರ‌್ಯ ಸಂದರ್ಭದಲ್ಲಿ, ಕಟ್ಟಕಡೆಯ ಪರಿಹಾರವಾಗಿ ಮಾತ್ರ ಸಂವಿಧಾನದ 356ನೇ ಪರಿಚ್ಚೇದವನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳಬಹುದು. ಆದರೆ ಭಾರತದ ಪ್ರಜಾಪ್ರಭುತ್ವ ಪ್ರಬುದ್ಧಗೊಂಡು ಬೆಳೆಯುತ್ತಾ ಹೋದಂತೆ ಇದನ್ನು ಬಳಸಬೇಕಾದ ಅವಕಾಶಗಳೂ ಕಡಿಮೆಯಾಗುತ್ತಾ ಹೋಗಿ ಮುಂದೊಂದು ದಿನ ಈ ಪರಿಚ್ಚೇದ `ಸತ್ತುಹೋಗಿರುವ ಅಕ್ಷರ~ಗಳಾಗಬಹುದು~ ಎಂದು ಆಶಿಸಿದ್ದರು. ಅಂಬೇಡ್ಕರ್ ಅವರ ಉಳಿದ ಹಲವಾರು ಆಶಯಗಳಂತೆ ಇದು ಕೂಡಾ ಈಡೇರಲೇ ಇಲ್ಲ.
ಎಸ್.ಆರ್.ಬೊಮ್ಮಾಯಿ ಮತ್ತು ಭಾರತ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಪಿ.ಜೀವನರೆಡ್ಡಿ ಅವರು ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸುತ್ತಾ ` ಸಂವಿಧಾನ ಜಾರಿಯಾದ ದಿನದಿಂದ ಈ ವರೆಗೆ (ಮಾರ್ಚ್ 11,1994) ತೊಂಬತ್ತಕ್ಕೂ ಹೆಚ್ಚು ಬಾರಿ 356ನೇ ಪರಿಚ್ಚೇದದಡಿ ರಾಷ್ಟ್ರಪತಿಗಳು ಕ್ರಮಕೈಗೊಂಡಿದ್ದಾರೆ. `ಸತ್ತುಹೋಗಿರುವ ಅಕ್ಷರ~ಗಳಾಗಬಹುದೆಂದು ಅಂಬೇಡ್ಕರ್ ನಿರೀಕ್ಷಿಸಿದ್ದ ಈ ಪರಿಚ್ಚೇದ ಈಗ ಹಲವಾರು ರಾಜ್ಯಸರ್ಕಾರ ಮತ್ತು ವಿಧಾನಸಭೆಗಳ ಪಾಲಿಗೆ `ಸಾವಿನ ಅಕ್ಷರ~ಗಳಾಗಿವೆ~ ಎಂದು ಹೇಳಿದ್ದರು. ಇತಿಹಾಸವನ್ನು ಮುಂದಿಟ್ಟುಕೊಂಡೇ ಜನ ವರ್ತಮಾನವನ್ನು ನೋಡುವುದರಿಂದಾಗಿ ಬಹುಸಂಖ್ಯೆಯಲ್ಲಿ ಜನ `ರಾಜ್ಯಪಾಲರೆಂದರೆ ರಾಜ್ಯದ ವಿರೋಧಿಗಳು~ ಎಂದು ತೀರ್ಮಾನಿಸಿ ಬಿಟ್ಟಿದ್ದಾರೆ. ಇದರಿಂದಾಗಿ `ಅಭದ್ರಸ್ಥಿತಿಯಲ್ಲಿದ್ದ ಸರ್ಕಾರವನ್ನು ಭದ್ರಗೊಳಿಸಲು ರಾಜ್ಯಪಾಲರನ್ನು ಎದುರುಹಾಕಿಕೊಂಡು ಕೂಗಿಕೊಂಡರೆ ಸಾಕು, ಜನ ನೆರವಿಗೆ ಬರುತ್ತಾರೆ~ ಎನ್ನುವಂತಾಗಿದೆ.  ಇಂತಹ ಪರಿಸ್ಥಿತಿಯಲ್ಲಿ ಭಾರದ್ವಾಜರು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿತ್ತು. ಅವರು ಹಾದಿ ಕಂಡಲ್ಲೆಲ್ಲಾ ನುಗ್ಗಿಬಿಟ್ಟು ಎಡವಿಬಿದ್ದಿದ್ದಾರೆ.
ಈ ಬೆಳವಣಿಗೆಗಳಿಂದಾಗಿ ರಾಜ್ಯಪಾಲರ ಹುದ್ದೆಯ ಚಾರಿತ್ರ್ಯಹನನವಾಗುತ್ತಿರುವುದು ಮಾತ್ರವಲ್ಲ, ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ರೂಪಿಸಲಾಗಿರುವ ಸಂವಿಧಾನದ 356ನೇ ಪರಿಚ್ಚೇದದ ವಿರುದ್ದವೇ ಜನ ತಿರುಗಿಬೀಳುವಂತಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ. ಕರ್ನಾಟಕದ ಉದಾಹರಣೆಯನ್ನೇ ನೋಡುವ. ಇತ್ತೀಚಿನ ಎಲ್ಲ ರಾಜಕೀಯ ಬಿಕ್ಕಟ್ಟುಗಳಿಗೆ ಮೂಲ ಕಾರಣ -ಬಿಜೆಪಿ ಪ್ರಾರಂಭಿಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ರಾಜಕಾರಣ. ಪಕ್ಷಾಂತರ ನಿಷೇಧ ಕಾಯಿದೆಯನ್ನು ದುಡ್ಡಿನ ಬಲದಿಂದ ನಿಷ್ಕ್ರೀಯಗೊಳಿಸಿದ ಪಾಪಕಾರ್ಯ ಅದು. ಅದಕ್ಕಾಗಿ ಬಳಕೆಯಾದ ದುಡ್ಡಿನ ಮೂಲ ರಾಜ್ಯದಲ್ಲಿ ಅನಿಯಂತ್ರಿತವಾಗಿ ನಡೆದ ಅಕ್ರಮಗಣಿಗಾರಿಕೆಯಲ್ಲಿದೆ. ಇವೆಲ್ಲವೂ ಒಂದು ವಿಷವರ್ತುಲ. ದುಡ್ಡಿನಿಂದ ಸಾಧ್ಯ ಇಲ್ಲ ಎಂದು ಅನಿಸಿದಾಗ ಸರ್ಕಾರ ಸಾಂವಿಧಾನಿಕ ಹುದ್ದೆಯಾದ ಸ್ಪೀಕರ್ ಸ್ಥಾನವನ್ನು ಕೈಗೊಂಬೆಯನ್ನಾಗಿ ಮಾಡಿ ಅವರಿಂದ ಮಾಡಬಾರದ ಕೆಲಸವನ್ನೆಲ್ಲ ಮಾಡಿಸಿತು. ಇದೇ ವೇಳೆ ಸರ್ಕಾರದ ಅಕ್ರಮಗಳ ವಿರುದ್ಧ ದನಿ ಎತ್ತಿದವರನ್ನು ಜಾತಿಯ ಭೂತ ತೋರಿಸಿ ಹೆದರಿಸಲಾಗುತ್ತಿದೆ. ಈ ಎಲ್ಲ ನಡವಳಿಕೆಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವುದೇ ಆಗಿದೆ. ಮತದಾರರೇ ಭ್ರಷ್ಟರಾಗಿ ಕಣ್ಣುಕುರುಡು ಮಾಡಿಕೊಂಡಿರುವ ಸ್ಥಿತಿಯಲ್ಲಿ ಚುನಾವಣೆ ಕೂಡಾ ಪರಿಹಾರ ಅಲ್ಲ ಎನ್ನುವಂತಾಗಿದೆ. ಹಾಗಿದ್ದರೆ ಏನು ಪರಿಹಾರ?
ಸರ್ಕಾರವೊಂದು ಅಧಿಕಾರದಲ್ಲಿ ಮುಂದುವರಿಯಲು ಬಹುಮತವೊಂದೇ ಆಧಾರವೇ? ರಾಷ್ಟ್ರಪತಿ ಆಳ್ವಿಕೆಯ ಪ್ರಶ್ನೆ ಚರ್ಚೆಗೆ ಬಂದಾಗೆಲ್ಲ ಎಲ್ಲರೂ ಎಸ್.ಆರ್.ಬೊಮ್ಮಾಯಿ ಮತ್ತು ಕೇಂದ್ರ ಸರ್ಕಾರದ ನಡುವಿನ ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸುತ್ತಾರೆ. ಈ ತೀರ್ಪು ರಾಷ್ಟ್ರಪತಿ ಆಳ್ವಿಕೆಯನ್ನು ಸಾರಸಗಟಾಗಿ ವಿರೋಧಿಸಿದೆ ಎನ್ನುವ ರೀತಿಯಲ್ಲಿ ವ್ಯಾಖ್ಯಾನ ಮಾಡಲಾಗುತ್ತಿದೆ. ಆದರೆ ವಾಸ್ತವ ಸ್ಥಿತಿ ಅದಲ್ಲ. `ಒಂದು ಸರ್ಕಾರ ಹೊಂದಿರುವ ಬಹುಮತ ವಿಧಾನಸಭೆಯಲ್ಲಿ ನಿರ್ಧಾರವಾಗಬೇಕೇ ಹೊರತು ರಾಜಭವನದಲ್ಲಿ ಅಲ್ಲ~ ಎಂದು ಒಂಬತ್ತು ನ್ಯಾಯಮೂರ್ತಿಗಳ ಸುಪ್ರೀಂಕೋರ್ಟ್ ಪೀಠ ಹೇಳಿದ್ದು ನಿಜ. ಆದರೆ ಒಂದು ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ಸದನದೊಳಗಿನ ಬಹುಮತವೊಂದೇ ಆಧಾರ ಎಂದು ಅದು ಹೇಳಿಲ್ಲ. ಎಸ್.ಆರ್.ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಕರ್ನಾಟಕವೂ ಸೇರಿದಂತೆ ಆರು ರಾಜ್ಯಗಳಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯ ವಿಚಾರಣೆ ನಡೆಸಿತ್ತೆನ್ನುವುದು ಬಹಳ ಮಂದಿಗೆ ತಿಳಿದಿಲ್ಲ. ಇವುಗಳಲ್ಲಿ ಕರ್ನಾಟಕ, ನಾಗಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಮಾತ್ರ ಸುಪ್ರೀಂಕೋರ್ಟ್ ರದ್ದುಪಡಿಸಿತ್ತು. ಅದೇ ನ್ಯಾಯಪೀಠ ಬಾಬರಿ ಮಸೀದಿ ಧ್ವಂಸದ ನಂತರ  ಮಧ್ಯಪ್ರದೇಶ, ರಾಜಸ್ತಾನ ಮತ್ತು ಹಿಮಾಚಲಪ್ರದೇಶದ ಸರ್ಕಾರಗಳನ್ನು ವಜಾಮಾಡಿದ್ದ ಕೇಂದ್ರಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಸಂವಿಧಾನದ ಆಶಯವಾದ ಜಾತ್ಯತೀತ ನಿಲುವಿಗೆ ವಿರುದ್ದವಾಗಿ ನಡೆದುಕೊಳ್ಳುವ ಸರ್ಕಾರದ ವಿರುದ್ದ 356ನೇ ಪರಿಚ್ಚೇದದಡಿ ಕ್ರಮಕೈಗೊಳ್ಳಬಹುದೆಂದು ನ್ಯಾಯಪೀಠ ತನ್ನ ತೀರ್ಪನ್ನು ಸಮರ್ಥಿಸಿಕೊಂಡಿತ್ತು. ಭ್ರಷ್ಟಾಚಾರದ ಕಾರಣಕ್ಕಾಗಿಯೇ ತಮಿಳುನಾಡು (1976) ಮತ್ತು ಮಣಿಪುರ (1979) ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ನಿದರ್ಶನಗಳಿವೆ.
ಸಂವಿಧಾನದ ಬಿಕ್ಕಟ್ಟುಗಳು ಒಂದೇ ಮಾದರಿಯದ್ದಾಗಿರುವುದಿಲ್ಲ, ಆದ್ದರಿಂದ ಅದಕ್ಕೆ ಏಕರೂಪದ ಪರಿಹಾರವೂ ಇರುವುದಿಲ್ಲ. ಕರ್ನಾಟಕದಲ್ಲಿ ಕಾಣಿಸಿಕೊಂಡಿದ್ದ ರಾಜಕೀಯ ಬಿಕ್ಕಟ್ಟು ಕೂಡಾ ಹೊಸಬಗೆಯದು. ಹಿಂದೆಂದೂ ಈ ಬಗೆಯ ಬಿಕ್ಕಟ್ಟು ಬೇರೆ ರಾಜ್ಯಗಳಲ್ಲಿ ಸೃಷ್ಟಿಯಾಗಿರಲಿಲ್ಲ. 2010ರ ಅಕ್ಟೋಬರ್ ಹನ್ನೆರಡರಿಂದ (ವಿಶ್ವಾಸಮತಯಾಚನೆಯ ದಿನ) 2011ರ ಮೇ ಹದಿಮೂರರ (ಸುಪ್ರೀಂಕೋರ್ಟ್ ತೀರ್ಪಿನ ದಿನ) ವರೆಗಿನ ಏಳು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರದ ಸ್ಥಾನಮಾನ ಏನು ಎಂಬುದೇ ಇಲ್ಲಿ ಚರ್ಚೆಗೀಡಾಗಿದ್ದ ಪ್ರಶ್ನೆ. ಒಂದು ರೀತಿಯಲ್ಲಿ ಈ ಬಿಕ್ಕಟ್ಟು ಸೃಷ್ಟಿಗೆ ಸುಪ್ರೀಂಕೋರ್ಟ್ ತೀರ್ಪು ಕೂಡಾ ಕಾರಣವಾಗಿರುವುದರಿಂದ ಇದಕ್ಕೆ ಪರಿಹಾರ ಅಲ್ಲಿಂದಲೇ ಬಂದಿದ್ದರೆ ಭವಿಷ್ಯದಲ್ಲಿ ಕಾಣಿಸಿಕೊಳ್ಳುವ ಇಂತಹ ಬಿಕ್ಕಟ್ಟನ್ನು ಪರಿಹರಿಸಲು ಅದು ಮಾರ್ಗಸೂಚಿಯಾಗುತ್ತಿತ್ತು.ಇಲ್ಲಿಯ ವರೆಗೆ 356ನೇ ಪರಿಚ್ಚೇದದಿಂದ ಉಂಟಾಗಿರುವ ಬಿಕ್ಕಟ್ಟುಗಳಿಗೆ ಸುಪ್ರೀಂಕೋರ್ಟ್ ತೀರ್ಪುಗಳೇ ಅಂತಿಮವಾಗಿ ಪರಿಹಾರ ಸೂಚಿಸಿದ್ದಲ್ಲವೇ? ಆದರೆ ಯುಪಿಎ ಸರ್ಕಾರ ಅದಕ್ಕೂ ಅವಕಾಶ ನೀಡದೆ ಕೈತೊಳೆದುಕೊಂಡು ಬಿಟ್ಟಿದೆ.

Monday, May 16, 2011

ದಿನೇಶ್ ಅಮೀನ್ ಮಟ್ಟು: ಕನ್ನಡ ಸಂವೇದನೆಯನ್ನು ಸೂಕ್ಷ್ಮಗೊಳಿಸುವ ಅಪೂರ್ವ ಪತ್ರಕರ್ತ


ದಿನೇಶ್ ಅಮೀನ್ ಮಟ್ಟು
ಪ್ರಜಾವಾಣಿಯ ಸಹಾಯಕ ಸಂಪಾದಕ ದಿನೇಶ್ ಅಮಿನ್‌ಮಟ್ಟು ಅವರು ೨೦೧೧ನೇ ಸಾಲಿನ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಡಾ.ಪುರುಷೋತ್ತಮ ಬಿಳಿಮಲೆ ಬರೆದಿರುವ ಲೇಖನ ಇಲ್ಲಿದೆ. ಪಿ.ಲಂಕೇಶರ ನಂತರ ಸಮಕಾಲೀನ ಜಗತ್ತನ್ನು ದಿನೇಶ್ ಅಮೀನ್ ಮಟ್ಟು ಅವರಷ್ಟು ಸೂಕ್ಷ್ಮಜ್ಞತೆಯಿಂದ ದಾಖಲಿಸಿದವರು ವಿರಳ. ಹೊಸ ತಲೆಮಾರಿನ ಪತ್ರಕರ್ತರಿಗೆ ದಿನೇಶ್ ಅವರ ಬರೆಹಗಳು ಪ್ರೇರಣೆಯನ್ನು ನೀಡಬಲ್ಲವು. ಆತ್ಮರತಿಯ, ಸ್ಟಾರ್‌ಗಿರಿಯ ಹಂಗಿಲ್ಲದಂತೆ ದೇಶದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಿದ್ಯಮಾನಗಳನ್ನು ಕಟ್ಟಿಕೊಡಬಲ್ಲ, ಆ ಮೂಲಕವೇ ಜನಪರವಾದ ಸಂವೇದನೆಗಳನ್ನು ಓದುಗರಲ್ಲಿ ಉದ್ದೀಪಸಬಲ್ಲ ದಿನೇಶ್ ಕನ್ನಡ ಪತ್ರಿಕಾರಂಗದ ಆಸ್ತಿ. ಬಿಳಿಮಲೆಯವರು ಬರೆದಿರುವ ಈ ಲೇಖನ ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಆಯ್ಕೆಯಾಗಿರುವ ದಿನೇಶ್ ಅವರು ಅದಕ್ಕೆ ಎಷ್ಟು ಅರ್ಹರು ಎಂಬುದನ್ನು ಸಾಬೀತುಪಡಿಸುತ್ತದೆ. ಸಂಪಾದಕೀಯ ಬಳಗದ ಪರವಾಗಿ ದಿನೇಶ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಈ ಲೇಖನವನ್ನು ಒದಗಿಸಿದಕ್ಕಾಗಿ ಬಿಳಿಮಲೆ ಅವರಿಗೆ ಥ್ಯಾಂಕ್ಸ್.
-ಸಂಪಾದಕೀಯ

ಪತ್ರಕರ್ತರ ನಡವಳಿಕೆಗಳು ಸಂಶಯಾಸ್ಪದವಾಗುತ್ತಿರುವ ಈ ಕಾಲದಲ್ಲಿ ಆ ವೃತ್ತಿಯ ಘನತೆ ಗೌರವಗಳನ್ನು ಕಾಪಾಡಿಕೊಂಡು ಹೋಗುತ್ತಿರುವ ಬೆರಳೆಣಿಕೆಯ ಕೆಲವೇ ಕೆಲವು ಪತ್ರಕರ್ತರಲ್ಲಿ ಶ್ರೀ ದಿನೇಶ್ ಅಮೀನ್ ಮಟ್ಟು ಅವರು ಒಬ್ಬರು. ತಮ್ಮ ಬರೆಹಗಳ ಮೊದಲ ಹಂತದಲ್ಲಿ ಜನರ ಸಂವೇದನೆಗಳಿಗೆ ಸೂಕ್ಷ್ಮವಾಗಿ ಧ್ವನಿಯಾಗುವ ಅವರು, ಎರಡನೇ ಹಂತದಲ್ಲಿ ನಿಧಾನವಾಗಿ  ಸಾರ್ವಜನಿಕರ ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯಾಗಿ ಉದೀಯಮಾನರಾಗುತ್ತಾರೆ. ವಿಸ್ತಾರವಾದ ಓದು, ಜನಗಳ ನಡುವಣ ನಿರಂತರ ಒಡನಾಟ, ಕನ್ನಡ ಭಾಷೆಯ ಮೇಲಿನ ಅಪೂರ್ವ ಹಿಡಿತಗಳ ಜೊತೆಗೆ ಅತ್ಯಂತ ಜನಪರವಾದ ಚಿಂತನಾಕ್ರಮಗಳ ಮೂಲಕ ದಿನೇಶ್ ಅವರು ಕರ್ನಾಟಕದ ಜನರ ಸಂವೇದನೆಗಳನ್ನು ಮತ್ತೆ ಮತ್ತೆ ಸೂಕ್ಷ್ಮಗೊಳಿಸುತ್ತಾ ಬಂದಿದ್ದಾರೆ. ಸಹೃದಯ ಸಾಮಾನ್ಯ ಜನತೆಯ ಕಣ್ಣುಗಳ ಮೂಲಕ ಅವರು ನಾಡನ್ನು ನೋಡುವ ಮತ್ತು ವಿವರಿಸುವ ರೀತಿ ಅಸಾಮಾನ್ಯವಾದುದು.

ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟು ಎಂಬ ಪುಟ್ಟ ಊರಿನಿಂದ ಹೊಟ್ಟೆಪಾಡಿಗಾಗಿ, ಮುಂಬೈಗೆ ವಲಸೆ ಹೋದ ತುಳು ಮಾತಾಡುವ ಕುಟುಂಬವೊಂದರಲ್ಲಿ ಮುಂಬೈಯಲ್ಲಿ ಜನಿಸಿದ ದಿನೇಶ್ (ಜನನ: ೧೯೫೯ )  ಅವರು ಮುಂಬೈಯ ಸರಕಾರಿ ಶಾಲೆಯೊಂದರಲ್ಲಿ ನಾಲ್ಕನೇ ತರಗತಿವರೆಗೆ ಓದಿ ಆನಂತರದ ವಿದ್ಯಾಭ್ಯಾಸವನ್ನು ಕರಾವಳಿಯ ಕಿನ್ನಿಗೋಳಿ, ಹೆಜಮಾಡಿ ಮತ್ತು ಸುರತ್ಕಲ್ ಗಳಲ್ಲಿ ಮುಗಿಸಿದರು. ಇಲ್ಲಿ ಓದಿದ ವಿದ್ಯೆಗೂ ದಿನೇಶ್ ಮುಂದೆ ಹಿಡಿದ ಹಾದಿಗೂ ಅಂತಹ ಸಂಬಂಧ ಏನೂ ಇಲ್ಲ. ಆದರೆ, ಹಸಿರುಡುಗೆ ಹೊದ್ದ ಕರಾವಳಿಯ ತುಳು ಮಣ್ಣಿನ ಗುಣಗಳಾದ, ಸರಳ, ನೇರ, ಮತ್ತು ಸ್ಪಷ್ಟತೆಗಳು ದಿನೇಶ್ ಅವರ ದೊಡ್ಡ ಶಕ್ತಿಗಳಾಗಿ ಭವಿಷ್ಯದಲ್ಲಿ ನಿರಂತರವಾಗಿ ಅವರ ಬೆಂಬಲಕ್ಕೆ ನಿಂತವು.

ದಿನೇಶ್ ಅವರ ಚಿಂತನಾ ಕ್ರಮ ಮತ್ತು ಬರೆಹಗಳಿಗೆ ಉತ್ತಮ ಆರಂಭ ಸಿಕ್ಕಿದ್ದು ಮಂಗಳೂರಿನಲ್ಲಿ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟರು ಆರಂಭಿಸಿದ್ದ ಮುಂಗಾರು ಪತ್ರಿಕೆಯಲ್ಲಿ. ಜನ ಶಕ್ತಿ ಬೆಳೆತೆಗೆವ ಕನಸಿನೊಂದಿಗೆ ಆರಂಭವಾದ ಆ ಪತ್ರಿಕೆಯಲ್ಲಿ ಪಳಗಿದ ಅವರು ೧೯೮೯ ರಲ್ಲಿ ಪ್ರಜಾವಾಣಿ ಪತ್ರಿಕೆ ಸೇರಿದರು. ಮುಂದೆ ಆ ಪತ್ರಿಕೆಯ ಪ್ರಮುಖ ವರದಿಗಾರರಾಗಿ ಬೆಂಗಳೂರು, ಧಾರವಾಡ, ತುಮಕೂರು, ದೆಹಲಿಗಳಲ್ಲಿ ಕೆಲಸ ಮಾಡಿ, ಪ್ರಸ್ತುತ ಪ್ರಜಾವಾಣಿಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಧಾರವಾಡ, ಹುಬ್ಬಳ್ಳಿ ಮತ್ತು ತುಮಕೂರುಗಳಲ್ಲಿ ಅವರು ಅಲ್ಲಿನ ಸ್ಥಳೀಯ ಸಮಸ್ಯೆ , ಜಿಲ್ಲಾ ಪಂಚಾಯತ್ ಆಡಳಿತ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಸವಿವರ ವರದಿ ಮಾಡಿದರೆ, ದೆಹಲಿಯಿಂದ ಲೋಕಸಭೆ, ರಾಜ್ಯಸಭೆಗಳ ಕಲಾಪ ವರದಿ, ಕಾವೇರಿ-ಕೃಷ್ಣಾ ಜಲಮಂಡಳಿ ಸಭೆಗಳ ವರದಿ, ಸುಪ್ರಿಂ ಕೋರ್ಟಿನಲ್ಲಿ ಕರ್ನಾಟಕದ ಕುರಿತಾದ ಚರ್ಚೆಗಳ ವಿಸ್ತೃತ ವರದಿ ಮಾಡಿದರು. ಚುನಾವಣೆಗಳು ನಡೆದಾಗ, ಜನರ ಬಳಿಗೆ ತೆರಳಿ ನೇರ ವರದಿ ಮಾಡಿದರು. ಉತ್ತರ ಭಾರತಾದ್ಯಂತ ಅವರು ಪ್ರವಾಸ ಮಾಡಿದ್ದಾರೆ. ೨೦೦೨ ರಲ್ಲಿ ನಡೆದ ಗುಜರಾತ್ ಕೋಮುಗಲಭೆಯ ಪ್ರತ್ಯಕ್ಷ ವರದಿ ಮಾಡಿದಾಗ ಕನ್ನಡದ ಓದುಗರು ಬೆಚ್ಚಿ ಬಿದ್ದರು. ಅಧಿಕಾರ ಹಿಡಿದವರ ಅಪಕ್ವ ಗ್ರಹಿಕೆಗಳು, ಆತುರದ ತೀರ್ಮಾನಗಳು, ಹಾಗೂ ಮುನ್ನೋಟವಿಲ್ಲದ ತೀರ್ಮಾನಗಳಿಂದಾಗಿ ದೇಶದಲ್ಲಾಗುವ ಅನಾಹುತಗಳನ್ನು ದಿನೇಶ್ ಅವರು ಪಕ್ಷಾತೀತವಾಗಿ, ಪೂರ್ವಾಗ್ರಹವಿಲ್ಲದೆ ಮಂಡಿಸುತ್ತಾರೆ. ಅವರು ಭಾಷಾಂಧರೂ ಅಲ್ಲ, ದೇಶಾಂಧರೂ ಅಲ್ಲ, ಬದಲು ಭಾರತದ ಒಕ್ಕೂಟ ವ್ಯವಸ್ಥೆಯ ಆಂತರಿಕ ತರ್ಕ ಮತ್ತು ಸಂಬಂಧಗಳನ್ನು ಪತ್ರಕರ್ತನೊಬ್ಬನ ದಿಟ್ಟತನದಲ್ಲಿ ಗ್ರಹಿಸಿ, ವಿಶ್ಲೇಶಿಸಿ ಮಂಡಿಸುವ ಅಸಾಧಾರಣ ಚೈತನ್ಯದ ಲೇಖಕ. ಕನ್ನಡ ಭಾಷೆ ದಿನೇಶ್ ಅವರಲ್ಲಿ ಹೊಸ ಕಸುವು ಕಂಡುಕೊಂಡಿತು. ಇದು ಸರಿಯಾಗಿ ಅರ್ಥವಾಗಲು ನಾವು  ದಿನೇಶ್ ಬರೆದ ಕಣ್ಣೆದುರಿನ ತಳಮಳ (೧೯೯೯), ದೆಹಲಿ ನೋ೧ ( ೨೦೦೮) ಮತ್ತು ನಾರಾಯಣ ಗುರು ( ೨೦೦೯)  ಕೃತಿಗಳನ್ನು ಓದಬೇಕು.

ಇಂದು ದೇಶದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರೆಂಬ ಖ್ಯಾತಿಗೆ ಒಳಪಟ್ಟಿರುವ, ದಿನೇಶ್ ಅಮೀನ್ ಅವರು ತಮ್ಮ ವೃತ್ತಿಯ ಭಾಗವಾಗಿ ದೇಶ ವಿದೇಶಗಳನ್ನು ಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದುವುಗಳೆಂದರೆ, ೨೦೦೫ ರಲ್ಲಿ ಮಾಡಿದ ಬ್ರೂನೈ ದ್ವೀಪ, ಫಿಲಿಪ್ಪೀನ್ಸ್ ಮತ್ತು ಮಲೇಷಿಯಾಗಳ ಪ್ರವಾಸ,  ೨೦೦೬ ರಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಜೊತೆ ಮಾಡಿದ ಕತಾರ್ ಮತ್ತು ಮಸ್ಕತ್ ದೇಶಗಳ ಪ್ರವಾಸ. ೨೦೦೮ರಲ್ಲಿ ಆಗಿನ ಲೋಕಸಭಾಧ್ಯಕ್ಷ ಸೋಮನಾಥ ಚಟರ್ಜಿ ಅವರು ರಚಿಸಿದ್ದ ಲೋಕಸಭಾ ಮಾಧ್ಯಮ ಸಲಹೆಗಾರ ಸಮಿತಿ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಡಾ.ಪುರುಷೋತ್ತಮ ಬಿಳಿಮಲೆ
ತಾವು ಕೆಲಸ ಮಾಡಿದ ಸ್ಥಳಗಳಲ್ಲಿ ಆಳವಾದ ನೆನಪುಗಳನ್ನು ದಿನೇಶ್ ಬಿಟ್ಟು ಹೋಗಿರುವುದಕ್ಕೆ ಕಾರಣ, ಅವರು ತಾವು ನೆಲೆಊರಿದ ಊರಿನ ಪ್ರಾದೇಶಿಕ ಗುಣಗಳನ್ನು ಮತ್ತು ಜನಗಳನ್ನು ಅರ್ಥಮಾಡಿಕೊಂಡ ಬಗೆ. ವರದಿ ಮಾಡುವುದಷ್ಟೇ ಅವರ ಕೆಲಸವಲ್ಲ, ಬದಲು ತಾವು ಕೆಲಸ ಮಾಡುತ್ತಿರುವ ಊರಿನ ಸಂವೇದನೆಗಳನ್ನು ಮತ್ತು ಅವುಗ ಸ್ವಭಾವಗಳನ್ನು ಅವರು ಅರ್ಥಮಾಡಿಕೊಳ್ಳುತ್ತಾರೆ. ಪ್ರಾದೇಶಿಕ ಅನನ್ಯತೆಯನ್ನು ಮರೆಯದೆ ಬರೆಯುತ್ತಾರೆ. ಹೀಗಾಗಿ ಅವರು ಮಂಗಳೂರಿನ  ಬಗ್ಗೆಯೂ, ಹುಬ್ಬಳ್ಳಿಯ ಬಗೆಯೂ ಒಂದೇ ರೀತಿಯಲ್ಲಿ ಬರೆಯುತ್ತಾರೆಂದು ನಮಗೆ ಅನಿಸುವುದಿಲ್ಲ.  ಮಂಗಳೂರಿನ ಬಗ್ಗೆ ಬರೆಯವಾಗ ದಿನೇಶ್‌ಗೆ ಶಿವರಾಮ ಕಾರಂತರು ಆದರ್ಶವಾದರೆ, ಹುಬ್ಬಳ್ಳಿ ಬಗ್ಗೆ ಬರೆಯುವಾಗ ಬೇಂದ್ರೆ ಆದರ್ಶ. ಇದೇ ಅವರ ಲೇಖನಗಳ ಸೃಜನಶೀಲತೆಯ ಗುಟ್ಟು. ಇದು ಇನ್ನೂ ಖಚಿತವಾಗಬೇಕಾದರೆ ನಾವು ಅವರ ದೆಹಲಿ ನೋಟ( ೨೦೦೮) ಕೃತಿಯನ್ನು ಓದಬೇಕು. ದೆಹಲಿ ರಾಷ್ಟ್ರದ ರಾಜಧಾನಿ, ಅಲ್ಲಿಂದ ಕರ್ನಾಟಕದ ಬಗ್ಗೆ ಬರೆಯುವಾಗ ಆ ಬರೆಹಕ್ಕೆ ರಾಷ್ಟ್ರೀಯ ಚೌಕಟ್ಟು ಇರಲೇಬೇಕು. ದೆಹಲಿ ನೋಟದ ಯಾವ ಲೇಖನವೂ ಈ ಚೌಕಟ್ಟನ್ನು ಮೀರಲೇ ಇಲ್ಲವಾದ್ದರಿಂದ ಅವುಗಳಿಗೆ ವಿಶೇಷವಾದ ಶಕ್ತಿ ಪ್ರಾಪ್ತಿಸಿದೆ. ರಾಜ್ಯದ ಸಮಸ್ಯೆಗಳು ಕೇಂದ್ರದಲ್ಲಿ ಹೇಗೆ ಪ್ರತಿನಿಧೀಕರಿಸಲ್ಪಡುತ್ತವೆ ಎಂದು ಕರ್ನಾಟಕದ ಜನರಿಗೆ ಮೊದಲ ಬಾರಿಗೆ ಸವಿಸ್ತಾರವಾಗಿ ತಿಳಿದದ್ದು ದಿನೇಶ್ ಅಂಕಣಗಳನ್ನು ಓದಲಾರಂಭಿಸಿದ ಮೇಲೆಯೇ. ಕೇಂದ್ರದಲ್ಲಿ ರಾಜ್ಯದ ದುರ್ಬಲ ಪ್ರತಿನಿಧೀಕರಣವನ್ನು ಅವರು ಪ್ರಖರ ಭಾಷೆಯಲ್ಲಿ ಅಷ್ಟೇ ಸೃಜನಶೀಲವಾಗಿ  ಪ್ರತೀತಗೊಳಿಸಿದರು. ಎಷ್ಟೋ ಹೋರಾಟಗಾರರು ಮತ್ತು ಜನಪ್ರತಿನಿಧಿಗಳು ದಿನೇಶ ಲೇಖನದಿಂದ ಪ್ರೇರಣೆ ಪಡೆದು ತಮ್ಮ ಹೋರಾಟದ ಹಾದಿಗಳನ್ನು ಹರಿತಗೊಳಿಸಿಕೊಂಡಿದ್ದಾರೆ. ಅವರ ಈಚಿನ ಅಂಕಣ ಅನಾವರಣ ವು ಪ್ರಜಾಸತ್ತಾತ್ಮಕ ವ್ಯವಸ್ಥೆಯ ದೌರ್ಬಲ್ಯ ಮತ್ತು ತಾಖತ್ತುಗಳನ್ನು ನಿಷ್ಪಕ್ಷಪಾತವಾಗಿ ಜನರ ಮುಂದಿರಿಸುತ್ತಿದೆ.

ದಿಟ್ಟವಾಗಿ ಬರೆಯುವ ದಿನೇಶ್ ಅವರ ಮೇಲೆ ಎಂತಹ ಒತ್ತಡಗಳಿರಬಹುದೆಂದು ನಾನು ಈಗ ಊಹಿಸಬಲ್ಲೆ. ಈ ಒತ್ತಡಗಳಿಗೆ ಬರಹಗಾರನೊಬ್ಬ ಬಲಿಯಾಗುವುದೆಂದರೆ, ಸುಲಭವಾಗಿ ಆರ್ಥಿಕವಾಗಿ ಭ್ರಷ್ಠನಾಗಿಬಿಡುವುದು, ಇಲ್ಲವೇ ನೈತಿಕ ದಿವಾಳಿತನದಿಂದ ಬರೆಹದ ಮೊನಚನ್ನು ಕಳೆದುಕೊಳ್ಳುವುದು. ದಿನೇಶ್ ಇಂಥ ಅಪಾಯಗಳಿಂದ ಪಾರಗಿ, ಸುರಕ್ಷಿತವಾಗಿ ಇದುವರೆಗೆ ಉಳಿದಿದ್ದಾರೆ. ಈ ಕಾಲದಲ್ಲಿ ಇದೊಂದು ಪವಾಡ ಸದೃಶ ಘಟನೆ. ಅದಕ್ಕಾಗಿ ಅವರನ್ನು ಎಲ್ಲ ಕನ್ನಡಿಗರ ಪರವಾಗಿ ಅಭಿನಂದಿಸುತ್ತೇನೆ.

ಪ್ರಾದೇಶಿಕ ಪಕ್ಷಗಳ ಬಗ್ಗೆ ಹೆಚ್ಚುತ್ತಿರುವ ಒಲವು

‘ಪ್ರಾದೇಶಿಕ ಪಕ್ಷಗಳೆಂಬ ಶಾಪದಿಂದಾಗಿಯೇ ಸರ್ಕಾರಗಳು ಪೂರ್ಣಾವಧಿ ಬಾಳದೆ ಅನಿಶ್ಚಿತ ರಾಜಕೀಯದ ಕೆಟ್ಟಕಾಲ ಪ್ರಾರಂಭವಾಗಿರುವುದು. ಇವುಗಳಿಗೆ ಅಂಟಿಕೊಂಡಿರುವ ಪಕ್ಷಾಂತರದ ಪಿಡುಗಿನಿಂದಾಗಿಯೇ ರಾಜಕೀಯ ವ್ಯವಸ್ಥೆ ಭ್ರಷ್ಟಗೊಂಡಿರುವುದು..’ ಎಂದೆಲ್ಲಾ ಆರೋಪಿಸುವವರಿದ್ದಾರೆ.
 ಆದರೆ ಇತ್ತೀಚೆಗೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯೂ ಸೇರಿದಂತೆ ಇತ್ತೀಚಿನ ಬಹುತೇಕ  ಚುನಾವಣೆಗಳಲ್ಲಿ  ಭಾರತೀಯ ಮತದಾರರು ಮೇಲಿನ ಆರೋಪಕ್ಕೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿರುವಂತೆ ಕಾಣುತ್ತಿಲ್ಲವೇ? ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚಾಗಿ ಪ್ರಾದೇಶಿಕ ಪಕ್ಷಗಳ ಬಗ್ಗೆ ಒಲವು ತೋರಿಸುತ್ತಿದ್ದಾರೆಂದು ಅನಿಸುವುದಿಲ್ಲವೇ?
ಪಶ್ಚಿಮಬಂಗಾಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಎಡಿಎಂಕೆಗಳೇ ಗೆಲುವಿನ ಮುಂಚೂಣಿಯಲ್ಲಿರುವುದು.ಅಸ್ಸಾಂನಲ್ಲಿ ತರುಣ್ ಗೋಗೋಯ್ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಪ್ರಾದೇಶಿಕ ಪಕ್ಷದ ನಾಯಕನ ಶೈಲಿಯಲ್ಲಿಯೇ ರಾಜ್ಯಭಾರ ಮಾಡಿಕೊಂಡು ಬಂದಿರುವುದು.

ಸಿಪಿಎಂನ ದೆಹಲಿ ನಾಯಕರಿಂದ ನಿರಂತರವಾಗಿ ಅವಮಾನಕ್ಕೆಡಾಗುತ್ತಾ ಬಂದ ವಿ.ಎಸ್ ಅಚ್ಯುತಾನಂದನ್ ಅವರನ್ನು ಗೆಲುವಿನ ಅಂಚಿಗೆ ತಂದು ನಿಲ್ಲಿಸಿದ ಕೇರಳ ಮತದಾರರ ರೋಷದಲ್ಲಿ ‘ಮಲೆಯಾಳಿ ಸ್ವಾಭಿಮಾನ’ದ ಅಭಿವ್ಯಕ್ತಿ ಇರಲಿಲ್ಲವೇ?
ಕಾಂಗ್ರೆಸ್ ವಿರುದ್ಧ ಬಂಡೆದ್ದ ಪುದುಚೇರಿಯ ಸರಳ-ಸಜ್ಜನ ನಾಯಕ ಎನ್.ರಂಗಸ್ವಾಮಿ ಅವರನ್ನು ಗೆಲ್ಲಿಸಿದ್ದು ಆ ಸಣ್ಣ ರಾಜ್ಯದ ಮತದಾರರ ಆತ್ಮಾಭಿಮಾನದ ದೊಡ್ಡ ಶಕ್ತಿಯಲ್ಲವೇ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಹಿನ್ನಡೆಯಾಗಿರುವುದು ಮಾತ್ರವಲ್ಲ, ದೇಶದ ಎರಡನೇ ಅತೀ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯ ಭೌಗೋಳಿಕ ಮಿತಿ ಕೂಡಾ ಬಯಲಾಗಿದೆ.

ಐದು ರಾಜ್ಯಗಳ ಒಟ್ಟು 824 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಐವರು ಶಾಸಕರು ಆಯ್ಕೆಯಾಗಿರುವುದನ್ನು ಬಿಟ್ಟರೆ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಕನಿಷ್ಠ ಒಂದು ಸ್ಥಾನವನ್ನೂ ಗಳಿಸಲು ಸಾಧ್ಯವಾಗಿಲ್ಲ.
ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸುವಾಗ ಬಿಜೆಪಿ ಈ ಐದು ರಾಜ್ಯಗಳಲ್ಲಿರುವ ಒಟ್ಟು 115 ಲೋಕಸಭಾ ಸ್ಥಾನಗಳನ್ನು ಪಕ್ಕಕ್ಕೆ ಇಟ್ಟು ರಾಜಕೀಯ ಬಲದ ಲೆಕ್ಕಾಚಾರ ಮಾಡಬೇಕಾಗುತ್ತದೆ.
2014ರ ಲೋಕಸಭಾ ಚುನಾವಣೆಗಿಂತ ಮೊದಲು ವಿಧಾನಸಭಾ ಚುನಾವಣೆ ನಡೆಯಲಿರುವ 19 ರಾಜ್ಯಗಳ ರಾಜಕೀಯದ ಮೇಲೆ ಕಣ್ಣಾಡಿಸಿದರೂ ರಾಷ್ಟ್ರೀಯ ಪಕ್ಷಗಳ ಬಲ ಕುಂದುವ ಸಾಧ್ಯತೆಗಳೇ ಹೆಚ್ಚಾಗಿ ಕಾಣುತ್ತಿವೆ.

ಈ 19 ರಾಜ್ಯಗಳಲ್ಲಿ ಎಂಟರಲ್ಲಿ (ಆಂಧ್ರಪ್ರದೇಶ, ದೆಹಲಿ, ಗೋವಾ, ಮಣಿಪುರ, ರಾಜಸ್ತಾನ,ಮೇಘಾಲಯ ಮತ್ತು ಮಿಜೋರಾಂ) ಕಾಂಗ್ರೆಸ್ ಅಧಿಕಾರದಲ್ಲಿದೆ. ಇನ್ನೊಂದು ರಾಜ್ಯವಾದ ಜಮ್ಮು ಮತ್ತು ಕಾಶ್ಮೆರದಲ್ಲಿ ನ್ಯಾಷನಲ್ ಕಾನ್‌ಫರೆನ್ಸ್ ಜತೆಗಿನ ಮೈತ್ರಿ ಸರ್ಕಾರ ಇದೆ.
ಎರಡು ಅವಧಿಗಳ ಆಡಳಿತ ವಿರೋಧಿ ಅಲೆ, ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಚಳುವಳಿ ಮತ್ತು ಜಗನ್‌ಮೋಹನ್ ರೆಡ್ಡಿಯವರ ಬಂಡಾಯದಿಂದಾಗಿ ಆಂಧ್ರಪ್ರದೇಶದ ಕಾಂಗ್ರೆಸ್ ಆಗಲೇ ನಿರ್ಗಮನದ ಹಾದಿಯಲ್ಲಿದೆ. ಮೂರನೇ ಅವಧಿಗೆ ಚುನಾವಣೆ ಎದುರಿಸಲಿರುವ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಕಾಮನ್‌ವೆಲ್ತ್ ಗೇಮ್ಸ್ ಹಗರಣದಿಂದಾಗಿ ಮುಖ ಮಸಿಮಾಡಿಕೊಂಡು ಮತದಾರರನ್ನು ಎದುರಿಸಲಾಗದಂತಹ ಸ್ಥಿತಿಯಲ್ಲಿದ್ದಾರೆ.
ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದು ಕಷ್ಟ. ಈಶಾನ್ಯದ ಮೂರು ಸಣ್ಣ ರಾಜ್ಯಗಳನ್ನು ಬಿಟ್ಟರೆ ಕಾಂಗ್ರೆಸ್ ಭರವಸೆ ಇಡಬಲ್ಲಂತಹ ಏಕೈಕ ರಾಜ್ಯ ರಾಜಸ್ತಾನ ಮಾತ್ರ. ಅದು ಪಕ್ಷಕ್ಕಿಂತಲೂ ಹೆಚ್ಚಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋತ್ ಅವರ ವೈಯುಕ್ತಿಕ ವರ್ಚಸ್ಸನ್ನು ಅವಲಂಬಿಸಿದೆ.
ರಾಜಸ್ತಾನ  ಮತ್ತು ದೆಹಲಿ ರಾಜ್ಯಗಳಲ್ಲಿ ತೃತೀಯರಂಗದ ಯಾವ ಪಕ್ಷವೂ ಇಲ್ಲದಿರುವ ಕಾರಣ ಕಾಂಗ್ರೆಸ್‌ನ ನಷ್ಟ  ಇನ್ನೊಂದು ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಲಾಭವಾಗಬಹುದು.
ಬಿಜೆಪಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವ  ಆರು ರಾಜ್ಯಗಳು ( ಗುಜರಾತ್,ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್‌ಗಡ, ಹಿಮಾಚಲ ಪ್ರದೇಶ ಮತ್ತು ಉತ್ತರಖಂಡ) ವಿಧಾನಸಭಾ ಚುನಾವಣೆ ಎದುರಿಸಲಿವೆ. 1995ರಿಂದ ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್‌ನಲ್ಲಿ ಮುಖ್ಯಮಂತ್ರಿ ನರೇಂದ್ರಮೋದಿ ಮೂರನೇ ಚುನಾವಣೆಯನ್ನು ಎದುರಿಸುವ ತಯಾರಿಯಲ್ಲಿದ್ದಾರೆ.
ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲಿಯೂ ಬಿಜೆಪಿಯದ್ದು ಈಗ ಎರಡನೇ ಅವಧಿಯ ಸರ್ಕಾರ. ಗುಜರಾತ್‌ನಲ್ಲಿ ಸತತ ಐದು ವಿಧಾನಸಭಾ ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್ ರಾಜಕೀಯವಾಗಿ ಮಾತ್ರವಲ್ಲ ನೈತಿಕವಾಗಿಯೂ ಕುಗ್ಗಿಹೋಗಿದೆ. ಆದ್ದರಿಂದ ನರೇಂದ್ರಮೋದಿ ಈಗಲೂ ಸುರಕ್ಷಿತವಾಗಿರುವಂತೆ ಕಾಣುತ್ತಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಭ್ರಷ್ಟಾಚಾರಗಳ ಆರೋಪಗಳು ಎಷ್ಟೇ ಇದ್ದರೂ ಈ ವರೆಗಿನ ಉಪಚುನಾವಣೆಗಳಲ್ಲಿ ಮತದಾರರು ಅವರ ಕೈಬಿಟ್ಟಿಲ್ಲ. ಭ್ರಷ್ಟ್ರರ ಬೆನ್ನಟ್ಟಿ ಮನೆಗೆ ಅಟ್ಟುತ್ತಿರುವ ದೇಶದ ಪ್ರಜ್ಞಾವಂತ ಮತದಾರರಿಗೆ ಸವಾಲು ಹಾಕುವಂತಿದೆ ಕರ್ನಾಟಕದ ಮತದಾರರ ವರ್ತನೆ.

ಇದು ಬಿಜೆಪಿಗೆ ನೆರವಾಗಲೂ ಬಹುದು.ಆದರೆ ಇದೇ ಮಾತನ್ನು ಇನ್ನಿಬ್ಬರು ಮುಖ್ಯಮಂತ್ರಿಗಳಾದ ಶಿವರಾಜ್‌ಸಿಂಗ್ ಚೌಹಾಣ್ ಮತ್ತು ರಮಣ್‌ಸಿಂಗ್ ಅವರ ಬಗ್ಗೆ ಹೇಳುವ ಹಾಗಿಲ್ಲ. ಇಬ್ಬರೂ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವುದು ಕಷ್ಟ.
ಪ್ರಾದೇಶಿಕ ಪಕ್ಷಗಳ ಸತ್ವಪರೀಕ್ಷೆಯ ಫಲಿತಾಂಶ ಮೊದಲು ಗೊತ್ತಾಗಲಿರುವುದು ಮುಂದಿನವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರಪ್ರದೇಶದಲ್ಲಿ. ಕಾಂಗ್ರೆಸ್ ಪಾಲಿಗೆ ಸಂಖ್ಯೆ ಮತ್ತು ಪ್ರತಿಷ್ಠೆಗಳೆರಡರ ದೃಷ್ಟಿಯಿಂದಲೂ ಈ ಚುನಾವಣೆ ನಿರ್ಣಾಯಕ. ರಾಹುಲ್‌ಗಾಂಧಿಯ ರಾಜಕೀಯ ಭವಿಷ್ಯ ಕೂಡಾ ಈ ಚುನಾವಣೆಯನ್ನು ಅವಲಂಬಿಸಿದೆ.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಲ್ಲಿ ಮುಖಭಂಗ ಅನುಭವಿಸಿದರೂ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಮೈಕೊಡವಿ ಎದ್ದುನಿಂತು ಶಕ್ತಿಪ್ರದರ್ಶನ ಮಾಡಿತ್ತು.ವಿಧಾನಸಭಾ ಚುನಾವಣೆಯಲ್ಲಿಯೂ ಈ ಮ್ಯಾಜಿಕ್ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ ರಾಹುಲ್‌ಗಾಂಧಿ.

ಆದರೆ ಪ್ರಾದೇಶಿಕ ರಾಜಕಾರಣದ ಎಲ್ಲ ವರಸೆಗಳನ್ನು ಬಲ್ಲ ಮಾಯಾವತಿ ಮತ್ತು ಮುಲಾಯಂಸಿಂಗ್ ಅವರಂತಹ ಚಾಣಕ್ಷ ರಾಜಕಾರಣಿಗಳನ್ನು ನಿರ್ಲಕ್ಷಿಸುವುದು ಸಾಧ್ಯ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯ ಜತೆಯಲ್ಲಿಯೇ ವಿಧಾನಸಭಾ ಚುನಾವಣೆ ಎದುರಿಸಲಿರುವ ಒರಿಸ್ಸಾದಲ್ಲಿ ಬಿಜು ಜನತಾದಳಕ್ಕೆ ಸಮರ್ಥ ಎದುರಾಳಿಯೇ ಇಲ್ಲದಿರುವಂತಹ ಸ್ಥಿತಿ ಇದೆ. ಅಲ್ಲಿ ಕಾಂಗ್ರೆಸ್ ಒಂದಷ್ಟು ಸ್ಥಾನಗಳನ್ನು ಗಳಿಸಲೂ ಬಹುದು.

ಆದರೆ ಬಿಜೆಪಿಗೆ ಹೆಚ್ಚಿನ ಲಾಭವಾಗದು. ಭವಿಷ್ಯದ ಪ್ರಧಾನಿ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ನವೀನ್ ಪಟ್ನಾಯಕ್  ಹ್ಯಾಟ್ರಿಕ್ ಸಾಧಿಸಿದರೆ ದೆಹಲಿ ಕಡೆ ಹೊರಡುವ ಸಾಧ್ಯತೆ ಇರುವುದರಿಂದ ಆ ರಾಜ್ಯದ ಮತದಾರರು ಆಶೀರ್ವದಿಸಲೂ ಬಹುದು.
ಪಂಜಾಬ್‌ನಲ್ಲಿ ಮಾತ್ರ ಪ್ರಾದೇಶಿಕ ಪಕ್ಷವಾದ ಅಕಾಲಿದಳದ ಅಧಿಕಾರ ಕೊನೆಗೊಂಡು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ಸಾಧ್ಯತೆಗಳೇ ಹೆಚ್ಚಿವೆ.
ಈ ರೀತಿ ಮೇಲ್ನೋಟಕ್ಕೆ ಪ್ರಾದೇಶಿಕ ಪಕ್ಷಗಳ ಬಲವರ್ಧನೆಯಾಗುತ್ತಿರುವಂತೆ ಕಾಣುತ್ತಿರುವುದು ನಿಜವಾದರೂ ವಾಸ್ತವ ಹಾಗಿಲ್ಲ. ಇದಕ್ಕೆ ಕಾರಣ ಜನಬೆಂಬಲದ ಕೊರತೆ ಅಲ್ಲ.

ಪ್ರಾದೇಶಿಕ ಪಕ್ಷಗಳ ಮುಖ್ಯ ದೌರ್ಬಲ್ಯವಾದ ‘ದಾಯಾದಿ ಕಲಹ’ ಅವುಗಳನ್ನು ದುರ್ಬಲಗೊಳಿಸುತ್ತಿದೆ. ಈ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುತ್ತಿರುವಂತೆ ಕಂಡರೂ ನಿಜವಾಗಿಯೂ ಇವುಗಳು ಕಾದಾಡುವುದು ಇನ್ನೊಂದು ಪ್ರಾದೇಶಿಕ ಪಕ್ಷದ ಜತೆಯಲ್ಲಿಯೇ.

ಹಾಗಿಲ್ಲದೆ ಇದ್ದಿದ್ದರೆ  ಲೋಕಸಭೆಯಲ್ಲಿ 205 ಸದಸ್ಯ ಬಲದ ಕಾಂಗ್ರೆಸ್ ಮತ್ತು 117 ಸದಸ್ಯ ಬಲದ ಬಿಜೆಪಿ ಎರಡೂ ವಿರೋಧ ಪಕ್ಷದಲ್ಲಿ ಕೂರಬೇಕಿತ್ತು. ಒಟ್ಟು 221 ಸದಸ್ಯಬಲದ ಪ್ರಾದೇಶಿಕ ಪಕ್ಷಗಳೇ ಅಧಿಕಾರದಲ್ಲಿರಬೇಕಿತ್ತು.

ಹಾಗಾಗುವುದೇ ಇಲ್ಲ. ಎಡಪಕ್ಷಗಳನ್ನು ಹೊರತುಪಡಿಸಿ ಲೋಕಸಭೆಯಲ್ಲಿ 33 ಪ್ರಾದೇಶಿಕ ಪಕ್ಷಗಳು ಪ್ರಾತಿನಿಧ್ಯ ಹೊಂದಿವೆ. ಇವುಗಳಲ್ಲಿ ಒಂಭತ್ತು ಯುಪಿಎ ಜತೆಯಲ್ಲಿವೆ, ಆರು ಎನ್‌ಡಿಎ ಜತೆಯಲ್ಲಿವೆ ಮತ್ತು ಹದಿನೆಂಟು ಪಕ್ಷಗಳು ಎರಡೂ ಮೈತ್ರಿಕೂಟದಲ್ಲಿ ಸೇರದೆ ಸ್ವತಂತ್ರವಾಗಿದ್ದುಕೊಂಡು ಆಗಾಗ ಷರತ್ತುಬದ್ದ ಬೆಂಬಲ ನೀಡುತ್ತಾ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡು ಇರುತ್ತವೆ. ಇದಕ್ಕೆ ಉತ್ತಮ ಉದಾಹರಣೆ- ಬಿಎಸ್‌ಪಿ ಮತ್ತು ಎಸ್‌ಪಿ ಜತೆಗಿನ ಕಾಂಗ್ರೆಸ್ ಪಕ್ಷದ ಸ್ನೇಹ ಮತ್ತು ದ್ವೇಷದ ಸಂಬಂಧ.
ಈ ಪ್ರಾದೇಶಿಕ ಪಕ್ಷಗಳ ಜಾತಕ ಬಿಡಿಸಿದರೆ ಅವುಗಳಲ್ಲಿ ಹೆಚ್ಚಿನವು ಒಂದರ ಜತೆ ಒಂದು ಹೊಂದುವುದೇ ಇಲ್ಲ. ಕಾಶ್ಮೆರದಲ್ಲಿ ನ್ಯಾಷನಲ್ ಕಾನ್‌ಫರೆನ್ಸ್ ಮತ್ತು ಪಿಡಿಪಿ, ಬಿಹಾರದಲ್ಲಿ ಜೆಡಿ (ಯು) ಮತ್ತು ಆರ್‌ಜೆಡಿ, ಉತ್ತರಪ್ರದೇಶದಲ್ಲಿ ಬಿಎಸ್‌ಪಿ ಮತ್ತು ಎಸ್‌ಪಿ, ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಶಿವಸೇನೆ, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ, ಆಂಧ್ರಪ್ರದೇಶದಲ್ಲಿ ತೆಲುಗುದೇಶಂ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ, ಅಸ್ಸಾಂನಲ್ಲಿ ಅಸ್ಸಾಂ ಗಣ  ಪರಿಷತ್ ಮತ್ತು ಎಐಯುಡಿಎಫ್ ಪರಸ್ಪರ ವಿರೋಧಪಕ್ಷಗಳು.

ಇವುಗಳು ಯಾವುದಾದರೂ ರಾಷ್ಟ್ರೀಯ ಪಕ್ಷದ ಜತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದು ಆದರೆ ತನ್ನ ವಿರೋಧಿಯಾದ ಪ್ರಾದೇಶಿಕ ಪಕ್ಷದ ಜತೆ ಕೈಜೋಡಿಸಲಾರದು. ಪ್ರಾದೇಶಿಕ ಪಕ್ಷಗಳ ಈ ದೌರ್ಬಲ್ಯವನ್ನೇ ಬಳಸಿಕೊಂಡು ಕಾಂಗ್ರೆಸ್ ಮತ್ತು ಬಿಜೆಪಿ ಕೇಂದ್ರದಲ್ಲಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಅಧಿಕಾರ ಹಂಚಿಕೊಂಡಿರುವುದು. ಪ್ರಾದೇಶಿಕ ಪಕ್ಷಗಳ ನಾಯಕರು ಭ್ರಷ್ಟರು, ಅಧಿಕಾರದಾಹಿಗಳು ಎಂಬ ಪ್ರಚಾರ ಕೂಡಾ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ತಮ್ಮ ಕೈಯಲ್ಲಿಯೇ ಇರಿಸಿಕೊಳ್ಳಲು ನೆರವಾಗಿದೆ.
ಪ್ರಾದೇಶಿಕ ಪಕ್ಷಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ವಿರೋಧ-ಅಸಹನೆ ವ್ಯಕ್ತವಾಗಲು ಮುಖ್ಯ ಕಾರಣ- ಪ್ರಾದೇಶಿಕ ಪಕ್ಷಗಳ ಸಾಧನೆಯ ಮೌಲ್ಯಮಾಪನವನ್ನು ದೇಶದ ಉತ್ತರ ಭಾಗದ ರಾಜ್ಯಗಳಿಂದ ಪ್ರಾರಂಭಿಸುವ ತಪ್ಪನ್ನು ಎಲ್ಲರೂ ಮಾಡುತ್ತಿರುವುದು.

ದೇಶದ ಮೊದಲ ಪ್ರಾದೇಶಿಕ ಪಕ್ಷದ ರಚನೆಯಾಗಿದ್ದು ತಮಿಳುನಾಡಿನಲ್ಲಿ. 1967ರಲ್ಲಿ ಸಿ.ಎನ್.ಅಣ್ಣಾದೊರೈ ನಾಯಕತ್ವದ ಡಿಎಂಕೆಯಿಂದಾಗಿ ದೂಳೀಪಟವಾದ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಕೂಡಾ ಸ್ವಂತಬಲದಿಂದ ಮರಳಿ ಅಧಿಕಾರಕ್ಕೆ ಬರಲಾಗಿಲ್ಲ. ಕಳೆದ ನಾಲ್ಕು ದಶಕಗಳಿಂದ ಕಳಗಂಗಳೇ ಹಂಚಿಕೊಂಡು ಆ ರಾಜ್ಯವನ್ನು ಆಳಿವೆ.
ಆಂಧ್ರಪ್ರದೇಶದಲ್ಲಿ 1983ರ ನಂತರದ 23 ವರ್ಷಗಲ್ಲಿ ನಡುವಿನ ಏಳುವರ್ಷಗಳನ್ನು ಹೊರತುಪಡಿಸಿದರೆ ಉಳಿದ ಅವಧಿಯಲ್ಲಿದ್ದದ್ದು ತೆಲುಗುದೇಶಂ ಎಂಬ ಪ್ರಾದೇಶಿಕ ಪಕ್ಷದ ಸರ್ಕಾರ. ಅಭಿವೃದ್ಧಿಯ ಯಾವ ಮಾನದಂಡದಲ್ಲಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಇತರ ರಾಜ್ಯಗಳಿಗಿಂತ ಹಿಂದೆ ಉಳಿದಿದೆ?

ಕೇರಳದಲ್ಲಿ ಹೆಚ್ಚುಕಡಿಮೆ ಎಡಪಕ್ಷಗಳು ಪ್ರಾದೇಶಿಕ ಪಕ್ಷಗಳ ಮಾದರಿಯಲ್ಲಿಯೇ ಆಡಳಿತ ನಡೆಸುತ್ತಾ ಬಂದಿವೆ. ಬಿಜು ಜನತಾದಳವನ್ನು ಸತತ ಎರಡು ಬಾರಿ ಗೆಲ್ಲಿಸಿದ ಒರಿಸ್ಸಾದ ಮತದಾರರು ಮೂರ್ಖರಿರಲಾರರು.

ಮಹಾರಾಷ್ಟ್ರದಲ್ಲಿಯೂ ಕಳೆದ ಹದಿನೈದು ವರ್ಷಗಳಲ್ಲಿ ಒಂದೋ ಎನ್‌ಸಿಪಿ ಇಲ್ಲವೇ ಶಿವಸೇನೆಯನ್ನು ಕಟ್ಟಿಕೊಂಡ ಮೈತ್ರಿಕೂಟವೇ ಆಡಳಿತ ನಡೆಸಿರುವುದು. ದೇಶದ ವಾಣಿಜ್ಯ ರಾಜಧಾನಿಯನ್ನು ಹೊಂದಿರುವ ಆ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆಯೇ?
ಪ್ರಾದೇಶಿಕ ಪಕ್ಷಗಳೆಂದಾಕ್ಷಣ ಎಲ್ಲರ ಕಣ್ಣು  ಬಿಹಾರ ಮತ್ತು ಉತ್ತರಪ್ರದೇಶಗಳತ್ತ ಹೊರಳುತ್ತಿರುವುದೇ ದೊಡ್ಡ ಸಮಸ್ಯೆ. ಸರ್ಕಾರಗಳ ಸಾಧನೆಯ ಮೌಲ್ಯಮಾಪನವನ್ನು ಉತ್ತರದ ಬದಲಿಗೆ ದಕ್ಷಿಣದಿಂದ ಪ್ರಾರಂಭಿಸಿದರೆ ಪ್ರಾದೇಶಿಕ ಪಕ್ಷಗಳ ಬಗೆಗಿನ ಪೂರ್ವಗ್ರಹ ನಿವಾರಣೆಯಾದೀತೇನೋ?
ಯಾವ ಪ್ರಾದೇಶಿಕ ಪಕ್ಷದ ನಾಯಕನೂ ಅಭಿವೃದ್ಧಿ ಬಗೆಗಿನ ಈಚರ್ಚೆಯನ್ನು ಎತ್ತಿಕೊಳ್ಳುತ್ತಲೇ ಇಲ್ಲ. ಎಲ್ಲರೂ ಮತದಾರರ ಪ್ರಾದೇಶಿಕ ಆಶೋತ್ತರಗಳನ್ನು ಒಳಗೊಂಡಿರುವ ಬೆಂಬಲವನ್ನು ಬಳಸಿಕೊಂಡು ಅಧಿಕಾರ ಹಿಡಿಯುವ ಸೆಣಸಾಟದಲ್ಲಿದ್ದಾರೆ.
ಮತದಾರರು ರಾಷ್ಟ್ರೀಯ ಪಕ್ಷಗಳಿಂದ ರೋಸಿಹೋಗಿ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿದರೆ, ‘ಪ್ರಾದೇಶಿಕ ಪಾಳೆಗಾರರು’ ಆ ಬೆಂಬಲವನ್ನು ರಾಷ್ಟ್ರೀಯ ಪಕ್ಷಗಳ ಯಜಮಾನರ ಪಾದಗಳಿಗೆ ಅರ್ಪಿಸಿ ಅಧಿಕಾರದ ಫಲವುಂಡು ಕೃತಾರ್ಥರಾಗುತ್ತಿದ್ದಾರೆ.

Monday, May 9, 2011

ಒಸಾಮ ಸತ್ತರೆ ನಾವ್ಯಾಕೆ ಕುಣಿಯಬೇಕು?

ಮನುಷ್ಯನ ರೋಷಕ್ಕೆ ಬೆಂಕಿಯ ಶಕ್ತಿ ಇದ್ದಿದ್ದರೆ ಕಳೆದ ಒಂದು ವಾರದ ಅವಧಿಯಲ್ಲಿ ಪಾಕಿಸ್ತಾನ ಸುಟ್ಟು ಬೂದಿಯಾಗಿ ಹೋಗಬೇಕಾಗಿತ್ತು. ಪಾಕಿಸ್ತಾನದಲ್ಲಿದ್ದ ಪಾತಕಿ ಒಸಾಮ ಬಿನ್ ಲಾಡೆನ್‌ನನ್ನು ಅಮೆರಿಕದ ‘ಸೀಲ್’ಗಳು ಹೊಡೆದುರುಳಿಸಿದ ಮರುಕ್ಷಣದಲ್ಲಿಯೇ ನಮ್ಮಲ್ಲಿನ ‘ದೇಶಪ್ರೇಮಿ’ಗಳ ರೋಮರೋಮಗಳು ನಿಮಿರಿ ನಿಂತುಬಿಟ್ಟಿವೆ.

‘ಯುದ್ಧ ಘೋಷಿಸಿ’ ‘ಬಾಂಬು ಹಾಕಿ’, ‘ತಲೆ ಕಡಿದು ತನ್ನಿ’ ಎಂದೆಲ್ಲಾ ವೀರಾವೇಶದ ಚೀತ್ಕಾರಗಳು ಪ್ರತಿದಿನ ಕೇಳುತ್ತಲೇ ಇವೆ. ಆಶ್ಚರ್ಯವೆಂದರೆ ಈ ರೀತಿಯ ವೀರಾವೇಶದ ಸಲಹೆಗಳನ್ನು ನೀಡುವವರಲ್ಲಿ ‘ಭಯೋತ್ಪಾದಕರ ಕೈಹಿಡಿದು ಕರೆದುಕೊಂಡು ಹೋಗಿ ತಾಲಿಬಾನಿಗಳಿಗೆ ಒಪ್ಪಿಸಿದ’ ಪಕ್ಷದ ‘ದೇಶಪ್ರೇಮಿ’ಗಳೂ ಇದ್ದಾರೆ. ನಮ್ಮಲ್ಲಿ ಮಾತ್ರವಲ್ಲ, ಅಮೆರಿಕದ ಜನತೆಗೂ ‘ದೇಶಪ್ರೇಮ’ದ ಸಮೂಹ ಸನ್ನಿ ಹಿಡಿದುಬಿಟ್ಟಿದೆ. ಆ ದೇಶದ ಅಧ್ಯಕ್ಷ ಬರಾಕ್ ಒಬಾಮ ಈಗ ಎಲ್ಲರ ಕೊಂಡಾಟದ ನಾಯಕ.
ಒಸಾಮ ಬಿನ್ ಲಾಡೆನ್ ಸಾವಿನಿಂದ ವಿಶ್ವಕ್ಕೆ ಆಗಲಿರುವ ಲಾಭ-ನಷ್ಟಗಳೇನು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಬಹುದು, ಆದರೆ ಆತನ ಸಾವಿನಿಂದಾಗಿ ತಕ್ಷಣಕ್ಕೆ ವಿಶ್ವದ ಇಬ್ಬರು ನಾಯಕರಿಗೆ ಲಾಭವಾಗಿದೆ. ಒಬ್ಬರು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ, ಇನ್ನೊಬ್ಬರು ಭಾರತದ ಪ್ರಧಾನಿ ಮನಮೋಹನ್ ಸಿಂಗ್. ದೀರ್ಘಾವಧಿಯ ಸಾಲದ ಬಾಧೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದಿಂದಾಗಿ ಅಮೆರಿಕನರು ಭ್ರಮನಿರಸನದತ್ತ ಸಾಗುತ್ತಿದ್ದಾಗಲೇ ಒಬಾಮ ಅವರಿಗೆ ಒಸಾಮ ಸಾವು ಜೀವದಾನ ಮಾಡಿದೆ.
ಅಮೆರಿಕದ ಪತ್ರಿಕೆಗಳು ಆಗಲೇ ಪೈಪೋಟಿಗೆ ಬಿದ್ದು ಒಬಾಮ ಅವರನ್ನು ಹಾಡಿ ಹೊಗಳತೊಡಗುತ್ತಿವೆ. ಭಾರತದಲ್ಲಿ ಭ್ರಷ್ಟಾಚಾರದ ಹಗರಣಗಳ ಭೂತ ಪ್ರಧಾನಿ ಕಾರ್ಯಾಲಯದ ಬಾಗಿಲನ್ನು ಬಡಿಯುತ್ತಿದ್ದಾಗಲೇ ಸ್ಫೋಟಗೊಂಡ ಒಸಾಮ ಸಾವಿನ ಸುದ್ದಿ ಜನರ ದೇಶಪ್ರೇಮವನ್ನು ಬಡಿದೆಬ್ಬಿಸಿದೆ. ಇದರಿಂದಾಗಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಒಂದಷ್ಟು ದಿನ ನಿಶ್ಚಿಂತೆಯಾಗಿರಬಹುದು. ಇಷ್ಟೇನಾ ಒಸಾಮ ಸಾವಿನ ಪರಿಣಾಮ?
ಹೌದು, ಸದ್ಯಕ್ಕೆ ಕಾಣುವುದಿಷ್ಟೆ. ಒಸಾಮನನ್ನು ಸಾಯಿಸುವುದೇನು ಬಂತು? ಅಲ್‌ಖೈದಾ ಸಂಘಟನೆಯ ಪಾಲಿಗೆ ಒಸಾಮ ಸತ್ತು ಬಹಳ ದಿನಗಳಾಗಿ ಹೋಗಿತ್ತು ಎನ್ನುವ ಸುದ್ದಿ ನಿಧಾನವಾಗಿ ಸೋರಿ ಹೊರಬರುತ್ತಿದೆ. ಅಲ್‌ಖೈದಾ ಸಂಘಟನೆಯೊಳಗೆ ಭುಗಿಲೆದ್ದಿರುವ ಅಧಿಕಾರದ ಸಂಘರ್ಷ ಲಾಡೆನ್‌ನನ್ನು ಅಪ್ರಸ್ತುತ ಮಾಡಿತ್ತು.
ಇನ್ನಷ್ಟು ದಿನಗಳು ಕಳೆದಿದ್ದರೆ ಸಂಗಾತಿಗಳೇ ಆತನನ್ನು ಮುಗಿಸಿಬಿಡುತ್ತಿದ್ದರೇನೋ? ಈ ಹಿನ್ನೆಲೆಯಿಂದಾಗಿಯೇ ಒಸಾಮ ಸುಳಿವನ್ನು ಅಮೆರಿಕನರಿಗೆ ಸಂಘಟನೆಯೊಳಗಿನ ನಾಯಕರೇ ನೀಡಿರಬಹುದೆಂಬ ಗುಮಾನಿ ಹುಟ್ಟಿಕೊಂಡಿರುವುದು. ಒಸಾಮ ಇನ್ನಷ್ಟು ದಿನ ಬದುಕಿದ್ದರೂ ಆತನಿಂದಾಗಿ ಮುಸ್ಲಿಂ ಭಯೋತ್ಪಾದನೆ ಆಕಾಶದೆತ್ತರಕ್ಕೆ ಬೆಳೆಯುತ್ತಿರಲಿಲ್ಲ, ಆತನ ಸಾವಿನಿಂದ ಅದು ಪಾತಾಳಕ್ಕೆ ಇಳಿದು ಸಮಾಧಿಯಾಗುವುದೂ ಇಲ್ಲ.
ಈಗ 34ಕ್ಕೂ ಹೆಚ್ಚು ದೇಶಗಳಲ್ಲಿ ಅಲ್‌ಖೈದಾ ನೆಲೆಗಳಿವೆ. ನೇರವಾಗಿ ಪ್ರವೇಶಿಸಲು ಸಾಧ್ಯ ಇಲ್ಲದ ದೇಶಗಳಲ್ಲಿನ ಸ್ಥಳೀಯ ಇಸ್ಲಾಂ ಭಯೋತ್ಪಾದಕ ಸಂಘಟನೆಗಳ ಜತೆ ಅದು ಸಂಬಂಧ ಸ್ಥಾಪಿಸಿಕೊಂಡಿದೆ. ಈಗ ಅಲ್‌ಖೈದಾಕ್ಕೆ ಒಸಾಮನ ಹೆಸರಷ್ಟೇ ಬೇಕು. ಈ ನಡುವೆ ಸಂಘಟನೆಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೈಪೋಟಿಗೆ ಇಳಿದಿರುವ ಅಲ್‌ಖೈದಾದ ಎರಡನೇ ಸಾಲಿನ ನಾಯಕರು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಭಯೋತ್ಪಾದನೆಯನ್ನು ತೀವ್ರಗೊಳಿಸುವ ಅಪಾಯವೂ ಇದೆ.
ಒಸಾಮ ಜೀವಂತವಾಗಿದ್ದುಕೊಂಡು ಏನೆಲ್ಲ ಮಾಡಲು ಸಾಧ್ಯ ಇತ್ತೋ, ಅವುಗಳನ್ನೆಲ್ಲ ಅಲ್‌ಖೈದಾ ಅಸ್ತಿತ್ವಕ್ಕೆ ಬಂದ 23 ವರ್ಷಗಳಲ್ಲಿ ಆತ ಮಾಡಿ ಬಿಟ್ಟಿದ್ದಾನೆ. ಆತ ಅಮೆರಿಕದ ಬೆನ್ನು ಹತ್ತಿಯೇ ಹದಿನೆಂಟು ವರ್ಷಗಳು ಕಳೆದಿವೆ. 9/11 ದಾಳಿಯ ಎಂಟು ವರ್ಷ ಮೊದಲು 1993ರಲ್ಲಿ ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ಭಯೋತ್ಪಾದಕರ ಮೊದಲ ದಾಳಿ ನಡೆದಿತ್ತು.
ಈಗ ಅಮೆರಿಕದ ಪೊಲೀಸರ ವಶದಲ್ಲಿರುವ ಆ ದಾಳಿಯ ರೂವಾರಿ ರಮ್ಜಿ ಯುಸೂಫ್ ಕೂಡಾ ಒಸಾಮ ಬಿನ್ ಲಾಡೆನ್ ಶಿಷ್ಯ. ಕೈಸನ್ನೆಯಿಂದಲೇ ಒಂದು ದೇಶವನ್ನು ನೆಲಸಮ ಮಾಡಿಬಿಡಬಲ್ಲಂತಹ ದೈತ್ಯ ಶಕ್ತಿಯ, ಇದಕ್ಕಾಗಿ ಎಂದೂ ಮುಗಿಯದ ಅಕ್ಷಯ ಸ್ವರೂಪಿ ಸಂಪನ್ಮೂಲವನ್ನು ವ್ಯಯಿಸಬಲ್ಲ ಶ್ರೀಮಂತಿಕೆಯ, ಬೆರಳತುದಿಯಲ್ಲಿಯೇ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹಿಡಿದುಕೊಂಡಿರುವ, ಮನಸ್ಸುಮಾಡಿದರೆ ನಮ್ಮ ಮಲಗುವ ಕೋಣೆಯೊಳಗೂ ಇಣುಕಬಲ್ಲ ಗುಪ್ತಚರ ಸಾಮರ್ಥ್ಯ ಹೊಂದಿರುವ ದೇಶಕ್ಕೆ ಒಬ್ಬ ಭಯೋತ್ಪಾದಕನನ್ನು ಕೊಂದು ಹಾಕಲು ಹದಿನೆಂಟು ವರ್ಷಗಳು ಬೇಕಾಯಿತೇ?
ಈ ಹದಿನೆಂಟು ವರ್ಷಗಳಲ್ಲಿ ಭಯೋತ್ಪಾದನೆ ಮತ್ತು ಅದರ ವಿರುದ್ಧದ ಕಾರ್ಯಾಚರಣೆಯಲ್ಲಿ ಸಾವಿರಾರು ಅಮಾಯಕರು ಪ್ರಾಣ ಕಳೆದುಕೊಂಡಿರುವುದಕ್ಕೆ ಯಾರು ಹೊಣೆ? ಅಮೆರಿಕ ಅಲ್ಲವೇ? ಅಮೆರಿಕದ ವೀರಗಾಥೆಯನ್ನು ಇತಿಹಾಸದ ಪುಟಗಳಲ್ಲಿ ವರ್ಣರಂಜಿತವಾಗಿ ದಾಖಲಿಸಲು ಹೊರಟವರು ಅದೇ ಇತಿಹಾಸ ಕೇಳುವ ಈ ಪ್ರಶ್ನೆಗೂ ಉತ್ತರಿಸಬೇಕಾಗುತ್ತದೆ.
ಅಮೆರಿಕದ ಈ ವೈಫಲ್ಯ ಮತ್ತು ಸ್ವಭಾವ ಸಹಜ ಧೂರ್ತತನದಿಂದಾಗಿ ಉಳಿದ ಎಲ್ಲ ದೇಶಗಳಿಗಿಂತ ಹೆಚ್ಚು ಕಷ್ಟ ನಷ್ಟ ಅನುಭವಿಸಿದ್ದು ಭಾರತ ಎನ್ನುವುದನ್ನು ಹೇಗೆ ಮರೆಯಲು ಸಾಧ್ಯ? ಆಫ್ಘಾನಿಸ್ತಾನದಲ್ಲಿ ಸೋವಿಯತ್ ರಷ್ಯಾ ನಡೆಸಿದ ದುಸ್ಸಾಹಸ ಸೋಲಿನಲ್ಲಿ ಕೊನೆಗೊಂಡ ನಂತರದ ಅವಧಿಯ ವಿದ್ಯಮಾನಗಳನ್ನು ನೋಡುತ್ತಾ ಬಂದರೆ ಪಾಕಿಸ್ತಾನಕ್ಕಿಂತ ದೊಡ್ಡ ಶತ್ರುವಾಗಿ ಅಮೆರಿಕವೇ ನಮಗೆ ಕಾಣಿಸುತ್ತದೆ.
ಮೊದಲನೆಯದಾಗಿ, ಸೋವಿಯತ್ ರಷ್ಯಾವನ್ನು ಸೋಲಿಸುವ ಮೂಲಕ ಭಾರತ ಬಹುವಾಗಿ ನೆಚ್ಚಿಕೊಂಡಿದ್ದ ಮಿತ್ರರಾಷ್ಟ್ರವನ್ನು ಅಮೆರಿಕ ಕಿತ್ತುಕೊಂಡಿತು. ಇದರಿಂದಾಗಿ ಭಾರತೀಯ ಉಪಖಂಡದಲ್ಲಿ ಅಮೆರಿಕದ ಅಟ್ಟಹಾಸಕ್ಕೆ ಇದಿರಾಡುವವರೇ ಇಲ್ಲದಂತಾಯಿತು. ಎರಡನೆಯದಾಗಿ, ಭಾರತದ ನೆಲದಲ್ಲಿ ರಕ್ತದೋಕುಳಿ ನಡೆಸುತ್ತಿರುವ ಭಯೋತ್ಪಾದಕರನ್ನು ಸೃಷ್ಟಿಸಿದ್ದು ಕೂಡಾ ಅಮೆರಿಕವೇ.
ಸೋವಿಯತ್ ರಷ್ಯಾವನ್ನು ಮಣಿಸುವ ಉದ್ದೇಶ ಸಾಧಿಸಿದ ನಂತರ ಅಮೆರಿಕ ಆಫ್ಘಾನಿಸ್ತಾನದಿಂದ ಜಾಗ ಖಾಲಿ ಮಾಡಿತು. ಇದರಿಂದಾಗಿ ಬಾಡಿಗೆ ಬಂಟರಾಗಿದ್ದ ಮುಜಾಹಿದ್‌ಗಳು ಒಮ್ಮಿಂದೊಮ್ಮೆಲೇ ನಿರುದ್ಯೋಗಿಗಳಾಗಿ ಹೋದರು.
ಕೊಲೆಗಡುಕರನ್ನು ಸೃಷ್ಟಿಸಿ ಕೆಲಸ ಮುಗಿದ ಮೇಲೆ ಅವರು ಸಾಮಾನ್ಯ ಮನುಷ್ಯರಂತೆ ಜೀವನ ಸಾಗಿಸಬೇಕೆಂದು ನಿರೀಕ್ಷಿಸುವುದು ಮೂರ್ಖತನ.
ಈ ನಿರುದ್ಯೋಗಿ ಮುಜಾಹಿದ್‌ಗಳಲ್ಲಿ ಒಂದಷ್ಟು ಮಂದಿ ತಾಲಿಬಾನ್ ಕಟ್ಟಲು ತೊಡಗಿಕೊಂಡರೆ ಉಳಿದವರಿಗೆ ಪಾಕಿಸ್ತಾನ ಕಾಶ್ಮೀರದಲ್ಲಿ ‘ಸ್ವಾತಂತ್ರ್ಯ ಹೋರಾಟ’ದ ಉದ್ಯೋಗ ಕಲ್ಪಿಸಿಕೊಟ್ಟಿತು. ಇದರ ಪರಿಣಾಮವಾಗಿಯೇ 1989ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳು ಉಲ್ಬಣಗೊಂಡಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕರ ತರಬೇತಿ ಶಿಬಿರಗಳು ತಲೆ ಎತ್ತಿದ್ದು ಮತ್ತು ಗಡಿ ನುಸುಳುವಿಕೆಯ ಪ್ರಮಾಣ ಹೆಚ್ಚಿದ್ದು. ಇದು ಅಮೆರಿಕದ ಆಗಿನ ಅಧ್ಯಕ್ಷ ರೋನಾಲ್ಡ್ ರೇಗನ್ ಭಾರತಕ್ಕೆ ನೀಡಿದ ‘ಕೊಡುಗೆ’.
9/11 ದಾಳಿಯ ನಂತರ ಅಮೆರಿಕದ ಪ್ರೇರಣೆಯಿಂದ ವಿಶ್ವಸಂಸ್ಥೆ ‘ಭಯೋತ್ಪಾದನೆಯ ವಿರುದ್ಧ ಜಾಗತಿಕ ಸಮರ’ ಘೋಷಿಸಿದಾಗ ಉಳಿದೆಲ್ಲ ದೇಶಗಳಿಗಿಂತ ಹೆಚ್ಚಿನ ನಿರೀಕ್ಷೆ ಇದ್ದದ್ದು ಭಾರತಕ್ಕೆ. ‘ಭಯೋತ್ಪಾದಕರನ್ನು ಮಾತ್ರವಲ್ಲ, ಅವರ ಆಶ್ರಯದಾತರನ್ನೂ ನಾಶಮಾಡುತ್ತೇವೆ’ ಎಂದು ಅಮೆರಿಕ ಅಧ್ಯಕ್ಷರು ಗುಡುಗಿದಾಗ ಸಹಜವಾಗಿಯೇ ಭಾರತಕ್ಕೆ ಖುಷಿಯಾಗಿತ್ತು. ಪಾಕಿಸ್ತಾನವನ್ನು ಬಗ್ಗಿಸಲು ಇದೇ ಸುವರ್ಣಾವಕಾಶ ಎಂಬ ನಿರೀಕ್ಷೆ ಗರಿ ಕೆದರಿತ್ತು. ಆದರೆ ನಂತರ ಇದಕ್ಕೆ ತದ್ವಿರುದ್ಧವಾದ ಬೆಳವಣಿಗೆಗಳು ನಡೆದು ಹೋದವು.
ಭಯೋತ್ಪಾದನೆಯ ವಿರುದ್ಧದ ಸಮರದಲ್ಲಿ ಭಾರತ ಅಲ್ಲ, ಪಾಕಿಸ್ತಾನ ಅಮೆರಿಕದ ಸಂಗಾತಿಯಾಗಿ ಹೋಯಿತು. ಆ ಎರಡೂ ದೇಶಗಳಿಗೆ ಅವುಗಳದ್ದೇ ಆಗಿರುವ ಸ್ವಾರ್ಥಪರ ಉದ್ದೇಶಗಳಿದ್ದವು. ಇವುಗಳ ನಡುವೆ ಒಂಟಿಯಾಗಿದ್ದು ಭಾರತ. ಅಮೆರಿಕದ ಸಮರಕ್ಕೆ ಭಾರತ ಘೋಷಿಸಿದ್ದು ಬೇಷರತ್ ಬೆಂಬಲ. ಆದರೆ ಪಾಕಿಸ್ತಾನದ್ದು ಷರತ್ತುಬದ್ದ ಬೆಂಬಲ.
ಈ ಸಮರದಲ್ಲಿ ಭಾರತ ಮತ್ತು ಇಸ್ರೇಲ್‌ಗಳನ್ನು ಸೇರಿಸಿಕೊಳ್ಳಬಾರದೆಂಬುದು ಅವುಗಳಲ್ಲೊಂದು ಷರತ್ತು. ಅಮೆರಿಕ ಅದಕ್ಕೆ ಒಪ್ಪಿಕೊಳ್ಳುವುದರ ಜತೆಗೆ ಆ ದೇಶಕ್ಕೆ ಭಾರಿ ಪ್ರಮಾಣದ ಆರ್ಥಿಕ ಮತ್ತು ಮಿಲಿಟರಿ ನೆರವನ್ನು ಒದಗಿಸಿತು. ಆರ್ಥಿಕ ದಿಗ್ಬಂಧನ ಮತ್ತು ಸೇನಾ ಆಡಳಿತದ ವೈಫಲ್ಯದಿಂದಾಗಿ ಕುಸಿದುಹೋಗಿದ್ದ ಪಾಕಿಸ್ತಾನ ಈ ನೆರವಿನಿಂದ ಚೇತರಿಸಿಕೊಂಡದ್ದು ಮಾತ್ರವಲ್ಲ, ಸೇನಾಬಲವನ್ನೂ ವೃದ್ಧಿಸಿಕೊಂಡಿತು. ಇದರ ಬಿಸಿ ತಗಲಿದ್ದು ಭಾರತಕ್ಕೆ.

ಆಫ್ಘಾನಿಸ್ತಾನದಲ್ಲಿ ಅಂದಾಜು 60 ಸಾವಿರ ತಾಲಿಬಾನ್ ಹೋರಾಟಗಾರರು ಇದ್ದಿರಬಹುದೆಂಬ ಅಂದಾಜು ಮಾಡಲಾಗಿತ್ತು.  ಪಾಕಿಸ್ತಾನದ ಐಎಸ್‌ಐ ಸಾಕುತ್ತಿದ್ದ ಈ ಜೆಹಾದಿಗಳೆಲ್ಲ ಅಮೆರಿಕದ ಕಾರ್ಯಾಚರಣೆಯಲ್ಲಿ ಸತ್ತಿರಲಾರರು. ಹಾಗಿದ್ದರೆ ಅಲ್ಲಿಂದ ಕಾಲುಕಿತ್ತ ಅವರೆಲ್ಲ ಎಲ್ಲಿ ಹೋದರು? ಪಾಕಿಸ್ತಾನ ಅವರನ್ನು ಭಾರತದ ಮೇಲೆ ಛೂ ಬಿಟ್ಟಿರುವುದರಲ್ಲಿ ಅನುಮಾನವೇ ಇಲ್ಲ.
ಅಮೆರಿಕದ ಜತೆ ಕೈಜೋಡಿಸಿದ್ದನ್ನು ವಿರೋಧಿಸುತ್ತಿದ್ದ ತಮ್ಮ ದೇಶದ ‘ಮಿಲಿಟರಿ-ಮದರಸಾ-ಮುಲ್ಲಾ’ ಕೂಟವನ್ನು ಒಲಿಸಿಕೊಳ್ಳಲು ಮುಷರಫ್ ಕಾಶ್ಮೀರದಲ್ಲಿನ ‘ಸ್ವಾತಂತ್ರ್ಯ ಹೋರಾಟ’ಕ್ಕೆ ಇನ್ನಷ್ಟು ಕುಮ್ಮಕ್ಕು ನೀಡುತ್ತಾ ಬಂದರು. 9/11ರ ನಂತರ ಅಮೆರಿಕದಲ್ಲಿ ಯಾವುದೇ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿ ನಡೆದಿಲ್ಲ. ಆದರೆ ಆ ದೇಶದ ಕರೆಗೆ ಓಗೊಟ್ಟು ಬೆಂಬಲ ಘೋಷಿಸಿರುವ ದೇಶಗಳಲ್ಲಿ ಭಯೋತ್ಪಾದನೆ ನಿಂತಿಲ್ಲ. ಇವುಗಳ ಪೈಕಿ ದೊಡ್ಡ ಬಲಿಪಶು ಭಾರತ.
ಇವೆಲ್ಲದರ ಅರಿವಿದ್ದರೂ, ಇಂದಿಗೂ ಕಾಶ್ಮೀರದಲ್ಲಿ ನಡೆಯುತ್ತಿರುವುದು ಗಡಿಯಾಚೆಗಿನ ಭಯೋತ್ಪಾದನೆ ಎಂದು ಹೇಳಲು ಅಮೆರಿಕ ಸಿದ್ಧ ಇಲ್ಲ. ಭಾರತದಲ್ಲಿ ನಡೆದಿರುವ ಭಯೋತ್ಪಾದಕ ಚಟುವಟಿಕೆಗಳ ಆರೋಪಿಗಳಿಗೆ ಪಾಕಿಸ್ತಾನ ಆಶ್ರಯ ನೀಡಿದೆ.
ಅವರಲ್ಲಿ ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ನಿಂದ ಹಿಡಿದು, ಮುಂಬೈನ ತಾಜ್‌ಹೊಟೇಲ್ ಮೇಲೆ ದಾಳಿಯ ರೂವಾರಿ ಹಫೀಜ್ ಶಹೀದ್ ವರೆಗೆ 20ಕ್ಕೂ ಹೆಚ್ಚು ಮಂದಿ ಪಾತಕಿಗಳಿದ್ದಾರೆ. ಒಸಾಮ ರೀತಿಯಲ್ಲಿ ಇವರ್ಯಾರೂ ಅಡಗುತಾಣಗಳಲ್ಲಿಲ್ಲ. ಎಲ್ಲರೂ ರಾಜಾರೋಷವಾಗಿ ಪಾಕಿಸ್ತಾನದ ನಗರಗಳಲ್ಲಿ ಸುತ್ತಾಡುತ್ತಿದ್ದಾರೆ. ಇವರ ಅಪರಾಧದ ವಿವರಗಳೆಲ್ಲವೂ ಅಮೆರಿಕದ ಮುಂದೆ ಇದೆ.
ಅಮೆರಿಕ ನಡೆಸುತ್ತಿರುವ ಭಯೋತ್ಪಾದಕರ ವಿರುದ್ಧದ ಜಾಗತಿಕ ಸಮರ ಪ್ರಾಮಾಣಿಕತೆಯಿಂದ ಕೂಡಿದ್ದರೆ ಈ ಪಾತಕಿಗಳನ್ನು ಯಾಕೆ ಕೈಕಾಲು ಕಟ್ಟಿ ಸಮುದ್ರಕ್ಕೆ ಎಸೆಯಲಿಲ್ಲ? ‘ಅಮೆರಿಕದ ಎದುರು ಪಾಕಿಸ್ತಾನದ ಬಣ್ಣ ಬಯಲಾಗಿದೆ.ಇನ್ನೂ ಅದರ ಆಟ ನಡೆಯಲಾರದು. ನೋಡ್ತಾ ಇರಿ, ಅಮೆರಿಕ ಹೇಗೆ ಪಾಕಿಸ್ತಾನವನ್ನು ಮಣಿಸಲಿದೆ’ ಎಂದು ಹೇಳುವ ಮುಗ್ಧರು ಈಗಲೂ ನಮ್ಮಲ್ಲಿದ್ದಾರೆ.
ಅಂತಹದ್ದೇನೂ ಆಗಲಾರದು. ಪಾಕಿಸ್ತಾನ ಮತ್ತು ಅಮೆರಿಕದ ಸಂಬಂಧ ಹಿಂದಿನಂತೆಯೇ ಮುಂದುವರಿಯಲಿದೆ. ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿರುವ ಸೇನೆಯಲ್ಲಿ ಒಂದಷ್ಟು ಭಾಗವನ್ನು ಅಮೆರಿಕ ವಾಪಸು ಕರೆಸಿಕೊಳ್ಳಬಹುದು, ಆದರೆ ಪೂರ್ತಿ ಜಾಗ ಖಾಲಿ ಮಾಡಿಕೊಂಡು ಹೋಗಲಾರದು. ‘ತೊಲಗಿ ಹೋಗಿ’ ಎನ್ನುವ ಸ್ಥಿತಿಯಲ್ಲಿ ಎರಡೂ ದೇಶಗಳೂ ಇಲ್ಲ. ಹೊರಟು ಹೋಗುವುದು ಅಮೆರಿಕಕ್ಕೂ ಬೇಕಾಗಿಲ್ಲ. ಅದಕ್ಕೆ ಮಧ್ಯ ಏಷ್ಯಾದ ಮೇಲಿನ ನಿಯಂತ್ರಣಕ್ಕೆ ನೆಲೆ ಬೇಕು. ತನ್ನ ಶಸ್ತ್ರಾಸ್ತ್ರಗಳ ಮಾರಾಟಕ್ಕೆ ಮಾರುಕಟ್ಟೆ ಬೇಕು, ಸೂಪರ್ ಪವರ್ ಆಗಿ ಬೆಳೆಯುತ್ತಿರುವ ಚೀನಾವನ್ನು ಹದ್ದುಬಸ್ತಿನಲ್ಲಿಡಬೇಕು.
ಇದಕ್ಕಾಗಿ ಭಾರತದಂತಹ ಪ್ರಬಲ ಪ್ರಜಾತಾಂತ್ರಿಕ ದೇಶವನ್ನು ‘ಗುಲಾಮಿ ರಾಷ್ಟ್ರ’ವನ್ನಾಗಿ ಮಾಡಿಕೊಳ್ಳುವುದು ಸಾಧ್ಯ ಆಗಲಾರದು. ಈ ಉದ್ದೇಶ ಸಾಧನೆಗಾಗಿ ದುರ್ಬಲ ಪಾಕಿಸ್ತಾನ ಅಲ್ಲದೆ ಬೇರೆ ಯಾವ ದೇಶ ಸಿಕ್ಕೀತು? ಇಂತಹ ವ್ಯವಸ್ಥೆಯಲ್ಲಿ ಒಸಾಮನಂತಹ ನೂರು ಭಯೋತ್ಪಾದಕರು ಸತ್ತರೂ ಭಾರತದ ನೆಲದಲ್ಲಿ ಶಾಂತಿ ನೆಲೆಸಲಾರದು. ಅದು ಸಾಧ್ಯವಾಗಬೇಕಾದರೆ ಭಯೋತ್ಪಾದಕರನ್ನು ಸೃಷ್ಟಿಸುತ್ತಿರುವ ವ್ಯವಸ್ಥೆ  ನಾಶವಾಗಬೇಕು. ಪಾಕಿಸ್ತಾನದ ತಲೆಮೇಲೆ ಅಮೆರಿಕದ ಅಭಯಹಸ್ತ ಇರುವವರೆಗೆ ಇದು ಸಾಧ್ಯವಾಗಲಾರದು.

Monday, May 2, 2011

ಪ್ರಶ್ನಿಸುವ ಸಂಸ್ಥೆಗಳ ಮೇಲೆಲ್ಲ ಕೆಂಗಣ್ಣು

ಭ್ರಷ್ಟಾಚಾರದ ನಿರ್ಮೂಲನೆಗಾಗಿ ‘ಅವತಾರವೆತ್ತಿ ಬರಲಿರುವ’ ಜನಲೋಕಪಾಲರ ನಿರೀಕ್ಷೆಯಲ್ಲಿ ದೇಶ ಮೈಮರೆತಿರುವಾಗಲೇ ಅದೇ ಉದ್ದೇಶಕ್ಕಾಗಿ ಬಹುಹಿಂದೆಯೇ ರಚನೆಗೊಂಡ ಸಂಸ್ಥೆಗಳಲ್ಲೊಂದಾದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ಯನ್ನು (ಪಿಎಸಿ) ದುರ್ಬಲಗೊಳಿಸುವ ಪ್ರಯತ್ನ ಪ್ರಾರಂಭವಾಗಿದೆ. ಇದು ಎರಡು ರಾಜಕೀಯ ಪಕ್ಷಗಳ ನಡುವಿನ ಸಂಘರ್ಷದಂತೆ ಮೇಲ್ನೋಟಕ್ಕೆ ಕಂಡರೂ ಇದರ ಆಳದಲ್ಲಿ ಪಿಎಸಿ ಸೇರಿದಂತೆ ತಮ್ಮನ್ನು ಪ್ರಶ್ನಿಸುವ ಅಧಿಕಾರ ಹೊಂದಿರುವ ಎಲ್ಲ ಸಂಸದೀಯ ಮತ್ತು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ರಾಜಕಾರಣಿಗಳು ಹೊಂದಿರುವ ಅಸಹನೆಯನ್ನು ಕಾಣಬಹುದಾಗಿದೆ.
ಸಿಬಿಐನಿಂದ ಹಿಡಿದು ಸಿವಿಸಿಯಂತಹ ಸಂಸ್ಥೆಗಳ ವರೆಗೆ, ಸ್ಪೀಕರ್‌ನಿಂದ ಹಿಡಿದು ನ್ಯಾಯಮೂರ್ತಿಗಳ ಹುದ್ದೆ ವರೆಗೆ ಎಲ್ಲವೂ ರಾಜಕಾರಣಿಗಳಿಂದ ನಿರಂತರವಾಗಿ ಚಾರಿತ್ರ್ಯಹನನಕ್ಕೆ ಒಳಗಾಗುತ್ತಾ ಬಂದಿವೆ. ಈಗ ಪಿಎಸಿ ಸರದಿ.
ಜನತೆಯ ಆಶೋತ್ತರಗಳ ಪ್ರತೀಕವಾಗಿರುವ ಸಂಸತ್, ಕಾನೂನು ರಚನೆಯ ಜತೆಯಲ್ಲಿ ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೂ ಕಣ್ಣಿಡುತ್ತದೆ. ಈ ಹೊಣೆ ನಿರ್ವಹಣೆಯಲ್ಲಿ ಸಂಸತ್‌ಗೆ ಪ್ರಧಾನ ಪಾತ್ರವಾದರೆ ಸಂಸದೀಯ ಸಮಿತಿಗಳಿಗೆ ಪೋಷಕ ಪಾತ್ರ. ಮೂರು ಹಣಕಾಸು ಸಮಿತಿಗಳಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಅಂದಾಜು ಸಮಿತಿ ಮತ್ತು ಸಾರ್ವಜನಿಕ ಉದ್ಯಮಗಳ ಸಮಿತಿ; ಜತೆಗೆ, ವಿವಿಧ ವಿಷಯಗಳ ಮೇಲಿನ 15 ಸದನ ಸಮಿತಿ, 29 ಸಚಿವ ಖಾತೆಗಳ ಸಲಹಾ ಸಮಿತಿ ಹಾಗೂ ಹದಿನೇಳು ಇಲಾಖಾವಾರು ಸಮಿತಿಗಳು ಸೇರಿದಂತೆ ಒಟ್ಟು 64 ಸಂಸದೀಯ ಸಮಿತಿಗಳಿವೆ. ಇವುಗಳ ಜತೆಗೆ ಆಗಾಗ ಕೇಳಿಬರುವ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.
ಪ್ರಧಾನಪಾತ್ರ ವಹಿಸಬೇಕಾಗಿರುವ ಸಂಸತ್ ಇತ್ತೀಚೆಗೆ ತನ್ನ ಕಾರ್ಯನಿರ್ವಹಣೆಯಲ್ಲಿ ವಿಫಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೋಷಕ ಪಾತ್ರಗಳಾದ ಸಂಸದೀಯ ಸಮಿತಿಗಳ ಜವಾಬ್ದಾರಿ ಹೆಚ್ಚಿದೆ. ಇದಕ್ಕಾಗಿಯೇ ಇವುಗಳ ಮೇಲೆ ರಾಜಕಾರಣಿಗಳ ಕೆಂಗಣ್ಣು ಬಿದ್ದಿರುವುದು. ಯುಪಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನಗಳಲ್ಲಿಯೇ ಕೇಂದ್ರ ಸರ್ಕಾರದ ಸಂಘರ್ಷಾತ್ಮಕ ನಿಲುವನ್ನು ಪ್ರತಿಭಟಿಸಿ ಎನ್‌ಡಿಎ ಸಂಸದೀಯ ಸಮಿತಿಗಳನ್ನು ಬಹಿಷ್ಕರಿಸುವ ಬೆದರಿಕೆ ಹಾಕಿತ್ತು. ಈಗ ಯುಪಿಎ ಸದಸ್ಯರು ಪಿಎಸಿ ಅಧ್ಯಕ್ಷರನ್ನೇ ಕಿತ್ತುಹಾಕಲು ಹೊರಟಿದ್ದಾರೆ.
ರಾಷ್ಟ್ರೀಯ ಹಣಕಾಸು ವ್ಯವಹಾರದ ಮೇಲಿನ ಸಂಸದೀಯ ನಿಯಂತ್ರಣದ ಮೂಲಕವೇ ಕಾರ್ಯಾಂಗವನ್ನು ಶಾಸಕಾಂಗಕ್ಕೆ  ಉತ್ತರದಾಯಿಯನ್ನಾಗಿ ಮಾಡಲು ಸಾಧ್ಯ. ಈ ಸಂಸದೀಯ ನಿಯಂತ್ರಣಕ್ಕಾಗಿ ಇರುವ ಹಲವು ಸಾಧನಗಳಲ್ಲಿ ಮುಖ್ಯವಾದುದು ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’. ಈ ಸಮಿತಿ ನಿಷ್ಪಕ್ಷಪಾತವಾಗಿ ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದಲ್ಲಿ ಪ್ರಜಾಸತ್ತಾತ್ಮಕ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಾರದು. ಭಾರತದಲ್ಲಿ ಸ್ವಾತಂತ್ರ್ಯಪೂರ್ವದಲ್ಲೇ ಪಿಎಸಿ ರಚನೆಯಾಗಿತ್ತು. 1921ರಲ್ಲಿ ಸ್ಥಾಪನೆಗೊಂಡ ಪಿಎಸಿಗೆ ಆಗಿನ ಗವರ್ನರ್ ಜನರಲ್ ಮಂಡಳಿಯ ಹಣಕಾಸು ಸದಸ್ಯರೇ ಅಧ್ಯಕ್ಷರಾಗಿದ್ದರು.
ಲೋಕಸಭಾಧ್ಯಕ್ಷರ ನಿಯಂತ್ರಣಕ್ಕೆ ಒಳಪಡಿಸಿದ ಪಿಎಸಿ ರಚನೆಗೊಂಡದ್ದು ಸಂವಿಧಾನ ರಚನೆಯಾದ ನಂತರ. ಈಗ ವಿವಾದಕ್ಕೆ ಸಿಲುಕಿರುವ ಪಿಎಸಿ ಅಧ್ಯಕ್ಷ ಸ್ಥಾನಕ್ಕೆ 1967ರವರೆಗೆ ಆಡಳಿತ ಪಕ್ಷದ ಸದಸ್ಯರೇ ನೇಮಕಗೊಳ್ಳುತ್ತಿದ್ದರು. ಆಶ್ಚರ್ಯವೆಂದರೆ ಈ ಸಂಪ್ರದಾಯ ತಪ್ಪಿಸಿ ಪಿಎಸಿ ಅಧ್ಯಕ್ಷ ಸ್ಥಾನಕ್ಕೆ ವಿರೋಧಪಕ್ಷದ ನಾಯಕರನ್ನು ಮೊದಲು ನೇಮಕಮಾಡಿದ್ದು ನಂತರದ ದಿನಗಳಲ್ಲಿ ವಿರೋಧಪಕ್ಷಗಳಿಂದ ಸರ್ವಾಧಿಕಾರಿ ಎಂದು ದೂಷಣೆಗೊಳಗಾದ ಆಗಿನ ಪ್ರಧಾನಿ ಇಂದಿರಾಗಾಂಧಿ. ಆ ರೀತಿ ನೇಮಕಗೊಂಡವರು ಹಿರಿಯ ಸಂಸದೀಯಪಟು ಎಂ.ಎಚ್.ಮಸಾನಿ. ಆಗಿನ ಲೋಕಸಭಾಧ್ಯಕ್ಷ ನೀಲಂ ಸಂಜೀವ ರೆಡ್ಡಿ ಅವರು ಮಸಾನಿಯವರ ಕಾರ್ಯಪಟುತ್ವ, ನಿಷ್ಪಕ್ಷಪಾತ ನಡವಳಿಕೆ ಮತ್ತು ಬದ್ಧತೆಯನ್ನು ಕೊಂಡಾಡಿರುವುದು ಲೋಕಸಭೆ ದಾಖಲೆಯಲ್ಲಿವೆ. ಮೊನ್ನೆ ಅದೇ ‘ಪಿಎಸಿಯ ಅಧ್ಯಕ್ಷರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದೇವೆ’ ಎಂದು ಬಹುಸಂಖ್ಯಾತ ಸದಸ್ಯರು ಕೂಗಾಡಿದ್ದಾರೆ. ಅಧ್ಯಕ್ಷರು ಪಟ್ಟುಹಿಡಿದು ಸಮಿತಿ ಅಂಗೀಕಾರ ನೀಡದ ಕರಡು ವರದಿಯನ್ನೇ ಲೋಕಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಸಾಮಾನ್ಯವಾಗಿ ವರ್ಷಕ್ಕೊಮ್ಮೆ ಮಂಡಿಸಲಾಗುವ ಬಜೆಟ್‌ನ ನಂತರ ಜನತೆ ಕೂಡಾ ದೇಶದ ಆಯವ್ಯಯದ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಬಹುಕೋಟಿ  ರೂಪಾಯಿ ಲೆಕ್ಕದ ಈ ಆರ್ಥಿಕ ವ್ಯವಹಾರ ಸಾಮಾನ್ಯ ಜನರ ತಲೆಗೆ ಹತ್ತುವುದು ಕೂಡಾ ಕಷ್ಟ. ಈ ಹಿನ್ನೆಲೆಯಲ್ಲಿಯೇ ಸಿಎಜಿ ಮತ್ತು ಪಿಎಸಿಯ ಪಾತ್ರ ಮಹತ್ವದ್ದು. ಬಜೆಟ್‌ನಲ್ಲಿ ನಿಗದಿಪಡಿಸಿದ ಅನುದಾನದ ಖರ್ಚಿನ ವಿವರವನ್ನು ಹೊಂದಿರುವ ಧನ ವಿನಿಯೋಗ ಲೆಕ್ಕಪತ್ರವನ್ನು ಸರ್ಕಾರದ ಪ್ರತಿಯೊಂದು ಇಲಾಖೆ ಸಂಸತ್‌ಗೆ ಸಲ್ಲಿಸಬೇಕಾಗುತ್ತದೆ.
ಈ ಲೆಕ್ಕಪತ್ರದ ಪರಿಶೋಧನೆ ನಡೆಸುವ ಮಹಾಲೇಖಪಾಲರು ಇಲಾಖಾವಾರು ವರದಿಗಳನ್ನು ತಯಾರಿಸಿ ಪಿಎಸಿಗೆ ಸಲ್ಲಿಸುತ್ತಾರೆ. ಸಂಸತ್‌ನ ಧನವಿನಿಯೋಗ ನಿಯಮಾವಳಿಗಳಿಗೆ ಅನುಗುಣವಾಗಿ ಸರ್ಕಾರಿ ಇಲಾಖೆಗಳು ಹಣ ಖರ್ಚು ಮಾಡಿವೆಯೇ ಎಂಬುದನ್ನು ಪರಿಶೀಲಿಸುವುದು ಪಿಎಸಿಯ ಕರ್ತವ್ಯ. ಸಿಎಜಿ ಮತ್ತು ಪಿಎಸಿ ಇಂತಹ ಪರಿಶೀಲನೆ ನಡೆಸುವಾಗಲೇ ಭ್ರಷ್ಟರ ಭಾನಗಡಿಗಳು ಹೊರಬೀಳುವುದು.
ವರದಿ ನೀಡುವವರೆಗೆ ಎಲ್ಲವೂ ಸರಿ. ನಂತರ? ಈಗಿನ ವಿವಾದವನ್ನೇ ಉದಾಹರಣೆಗಾಗಿ ತೆಗೆದುಕೊಂಡರೆ ಮುರಳಿ ಮನೋಹರ ಜೋಷಿ ಸಲ್ಲಿಸಿರುವ ವರದಿಯನ್ನು ಲೋಕಸಭಾಧ್ಯಕ್ಷರು ತಿರಸ್ಕರಿಸುವ ಎಲ್ಲ ಸಾಧ್ಯತೆಗಳಿವೆ. ಯಾಕೆಂದರೆ ಅದು ಸಮಿತಿಯ ಅಂಗೀಕಾರ ಇಲ್ಲದ ಕರಡು ವರದಿ. ಪಿಎಸಿಯ ಅಂತಿಮ ವರದಿಗಳೇ ಶೈತ್ಯಾಗಾರದಲ್ಲಿರುವಾಗ ಈ ಕರಡು ವರದಿಯನ್ನು ಕೇಳುವವರಾರು? ಸಂಸತ್‌ಗೆ ಐವತ್ತು ವರ್ಷ ತುಂಬಿದ್ದ ಸಂದರ್ಭದಲ್ಲಿ ಪಿಎಸಿ ವರದಿಗಳ ಬಗ್ಗೆ ಒಂದು ಸಮೀಕ್ಷೆ ನಡೆದಿತ್ತು. ಅದರ ಪ್ರಕಾರ ಏಳನೇ ಲೋಕಸಭೆಯಿಂದ ಹದಿಮೂರನೇ ಲೋಕಸಭೆಯ ವರೆಗಿನ ಅವಧಿಯಲ್ಲಿ ಪಿಎಸಿ ಮಾಡಿರುವ 6113 ಶಿಫಾರಸುಗಳಲ್ಲಿ ಸರ್ಕಾರ ಒಪ್ಪಿಕೊಂಡಿದ್ದು 3709 ಮಾತ್ರ.
ಮುಕ್ತ ಮಾರುಕಟ್ಟೆಯಿಂದ ಪಡೆಯುವ ಸಾಲದ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಪಿಎಸಿ ನಿರಂತರವಾಗಿ ಶಿಫಾರಸು ಮಾಡುತ್ತಾ ಬಂದ ಕಾರಣದಿಂದಾಗಿಯೇ 2000ನೇ ವರ್ಷದಲ್ಲಿ ‘ಹಣಕಾಸು ಜವಾಬ್ದಾರಿ ಮಸೂದೆ’ ಮಂಡನೆಯಾಗಿದ್ದು. ಲೋಕಸಭೆಯ ಅವಧಿಯಲ್ಲಿ ಸಾರ್ವಜನಿಕ ಉದ್ಯಮಗಳ ಷೇರುವಿಕ್ರಯದ ಬಗ್ಗೆ ನೀಡಿದ ವರದಿಯಲ್ಲಿ ಪಿಎಸಿ ‘ಈ ವ್ಯವಹಾರದಲ್ಲಿ ಪಾರದರ್ಶಕತೆಯ ಅವಶ್ಯಕತೆಯಿದ್ದು ಇದರಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಗೊಳಿಸಬೇಕಾಗುತ್ತದೆ’ ಎಂದು ಹೇಳಿತ್ತು.
ಇದನ್ನು ಒಪ್ಪಿಕೊಂಡ ಆಗಿನ ಕೇಂದ್ರ ಸರ್ಕಾರ, ತನಿಖಾ ಸಮಿತಿಯನ್ನು ನೇಮಿಸಿತ್ತು. ವಸತಿ ಮಂಜೂರಾತಿಯಲ್ಲಿ ವಸತಿ ಸಚಿವರ ವಿವೇಚನಾಧಿಕಾರದ ದುರ್ಬಳಕೆ ತಡೆಯಬೇಕೆಂಬ ಪಿಎಸಿ ಶಿಫಾರಸನ್ನು ಸರ್ಕಾರ ಒಪ್ಪಿಕೊಂಡು ಹೊಸ ನೀತಿಯೊಂದನ್ನು ರೂಪಿಸಿತ್ತು. ಇವು ಪಿಎಸಿ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡ ಕೆಲವು ಉದಾಹರಣೆಗಳು. ಇತ್ತೀಚಿನ ದಿನಗಳಲ್ಲಿ ಪಿಎಸಿ ಶಿಫಾರಸುಗಳನ್ನು ಒಪ್ಪಿಕೊಂಡಿದ್ದಕ್ಕಿಂತ ತಿರಸ್ಕರಿಸಿರುವುದೇ ಹೆಚ್ಚು. ಪಿಎಸಿ ದೊಡ್ಡಕುಳಗಳತ್ತ ಕಣ್ಣು ಹಾಕಿದಾಗೆಲ್ಲ ಪ್ರತಿರೋಧ ಎದುರಾಗುತ್ತದೆ. ಕಾರ್ಗಿಲ್ ಯುದ್ಧದ ಕಾಲದಲ್ಲಿ ನಡೆದ ಶವಪೆಟ್ಟಿಗೆ ಖರೀದಿ ಅವ್ಯವಹಾರವನ್ನು ಸಿಎಜಿ ಬಯಲುಗೊಳಿಸಿದರೂ ಆಗಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಎನ್‌ಡಿಎ ಸರ್ಕಾರ ಬಿಟ್ಟುಕೊಡಲಿಲ್ಲ.
ಈಗ 2ಜಿ ತರಂಗಾಂತರದ ವ್ಯವಹಾರದಲ್ಲಿನ ಅಕ್ರಮದಲ್ಲಿ ಪ್ರಧಾನಿ ಕಾರ್ಯಾಲಯದ ಪಾತ್ರ ಉಲ್ಲೇಖಿಸಿದ ಕೂಡಲೇ ಪಿಎಸಿಯನ್ನೇ ಬರ್ಖಾಸ್ತುಗೊಳಿಸುವ ಪ್ರಯತ್ನ ನಡೆದಿದೆ.
ರಾಜ್ಯಗಳದ್ದೂ ಇದೇ ಸ್ಥಿತಿ. ಯಾವ ರಾಜ್ಯದಲ್ಲಿಯೂ ಪಿಎಸಿ ಕಾರ್ಯನಿರ್ವಹಣೆ ಸಮಾಧಾನಕರವಾಗಿಲ್ಲ. ಬಹಳಷ್ಟು ರಾಜ್ಯಗಳಲ್ಲಿ ಸರ್ಕಾರಿ ಇಲಾಖೆಗಳು ಬಜೆಟ್ ಅನುದಾನವನ್ನು ಮೀರಿ ಖರ್ಚು ಮಾಡಿವೆ. ಈ ಮಿತಿಮೀರಿದ ಖರ್ಚಿಗೆ ವಿಧಾನಮಂಡಲದ ಅಂಗೀಕಾರ ಅನಿವಾರ್ಯವಾದರೂ ಯಾರೂ ಆ ಬಗ್ಗೆ  ತಲೆಕೆಡಿಸಿಕೊಂಡಿಲ್ಲ. ಈ ಲೋಪವೇ ಹಣಕಾಸು ಅವ್ಯವಹಾರದ ಹಗರಣಗಳಿಗೆ ದಾರಿಮಾಡಿಕೊಡುತ್ತಿರುವುದು.

1987-88ರಿಂದ 1995-96ರ ವರೆಗೆ ಬಿಹಾರ ರಾಜ್ಯದ ಪಶುಸಂಗೋಪನಾ ಇಲಾಖೆ ಬಜೆಟ್ ನಿಗದಿಪಡಿಸಿದ್ದ ಅನುದಾನ ಮೀರಿ ಖರ್ಚು ಮಾಡುತ್ತಲೇ ಇತ್ತು. ಉದಾಹರಣೆಗೆ  1993-94 ರ ಅವಧಿಯಲ್ಲಿ ಬಜೆಟ್ ಅನುದಾನ 77 ಕೋಟಿ ರೂಪಾಯಿಗಳಾದರೆ ಖರ್ಚಾಗಿರುವುದು 199 ಕೋಟಿ ರೂಪಾಯಿ, 1995-96ರಲ್ಲಿ ಬಜೆಟ್ ಅನುದಾನ 82 ಕೋಟಿ ರೂಪಾಯಿಗಳಾದರೆ ಖರ್ಚಾಗಿರುವುದು 228 ಕೋಟಿ ರೂಪಾಯಿ. ಕೊನೆಗೊಂದು ದಿನ ಎಲ್ಲವೂ ಬಯಲಾಯಿತು. 1999ರ ಮಾರ್ಚ್ ತಿಂಗಳ ವರೆಗಿನ ಅವಧಿಯ ದಾಖಲೆಗಳ ಪ್ರಕಾರ ಬಜೆಟ್ ಮಿತಿಯನ್ನು ಮೀರಿ ರಾಜ್ಯಗಳಲ್ಲಿ ಖರ್ಚಾಗಿರುವ ಹಣದ ಮೊತ್ತ 93,000 ಕೋಟಿ ರೂಪಾಯಿ.
ರಾಜಕೀಯ ದಾಳಿಗಳನ್ನು ಸಮರ್ಥವಾಗಿ ಎದುರಿಸಲು ಪಿಎಸಿಗೆ ಸಾಧ್ಯವಾಗದೆ ಇರುವುದಕ್ಕೆ ಅದರ ರಚನೆಯಲ್ಲಿನ ದೋಷ ಮತ್ತು ಕಾರ್ಯನಿರ್ವಹಣೆಯಲ್ಲಿನ ಇತಿಮಿತಿಗಳೂ ಕಾರಣ. ಉದಾಹರಣೆಗೆ ಲೆಕ್ಕಪತ್ರವನ್ನು ಪರಿಶೀಲಿಸುವಾಗ ಸಂಬಂಧಿತ ಇಲಾಖೆಯ ಕಾರ್ಯದರ್ಶಿಗಳು ಪಿಎಸಿ ಮುಂದೆ ಹಾಜರಾಗಿ ಸಾಕ್ಷ್ಯ ನೀಡಬೇಕೆಂದು ಹೇಳುತ್ತದೆ ನಿಯಮ. ಆದರೆ ನಿರ್ದಿಷ್ಟ ಪ್ರಕರಣವನ್ನು ನಿರ್ವಹಿಸಿದ ಅಧಿಕಾರಿಗಳ ಸಾಕ್ಷ್ಯ ಕಡ್ಡಾಯ ಅಲ್ಲ. ಇದರಿಂದಾಗಿ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ಹೊರಿಸಲು ಸಾಧ್ಯವಾಗುತ್ತಿಲ್ಲ. ಅಮೆರಿಕದಲ್ಲಿ ಅಧಿಕಾರಿಗಳು ಮಾತ್ರವಲ್ಲ, ಅವಶ್ಯಕ ಸಂದರ್ಭಗಳಲ್ಲಿ  ಸಾರ್ವಜನಿಕ ವ್ಯಕ್ತಿಗಳಿಂದಲೂ ಸಾಕ್ಷ್ಯ ಸಂಗ್ರಹಿಸಬಹುದಾಗಿದೆ. ಪಿಎಸಿ ವರದಿ ನೀಡುವಾಗ ಆಗುತ್ತಿರುವ ವಿಳಂಬಕ್ಕೆ ಇನ್ನೊಂದು ಕಾರಣ ಸಾವಿರಾರು ಪುಟಗಳ ಸಿಎಜಿ ವರದಿ. ಇದರ ಬದಲಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವದೆನಿಸಿದ ಪ್ರಕರಣಗಳ ಲೆಕ್ಕಪತ್ರಗಳ ವರದಿಯನ್ನಷ್ಟೇ ಸಿಎಜಿ ಸಲ್ಲಿಸಿದರೆ ಪಿಎಸಿ ಪರಿಶೀಲನೆಗೂ ಅನುಕೂಲವಾಗಬಹುದು ಎನ್ನುವ ಅಭಿಪ್ರಾಯ ಇದೆ.
ಪಿಎಸಿಯ ಕಾರ್ಯನಿರ್ವಹಣೆಯಲ್ಲಿನ ಮತ್ತೊಂದು ಸಮಸ್ಯೆ ವಿಳಂಬವಾಗಿ ಸಲ್ಲಿಸಲಾಗುವ ಲೆಕ್ಕಪತ್ರಗಳು. ಈಗ ವಿವಾದ ಸೃಷ್ಟಿಸಿರುವ 2ಜಿ ತರಂಗಾಂತರ ಹಗರಣ ನಡೆದಿದ್ದು 2007-2008ರ ಹಣಕಾಸು ವರ್ಷದಲ್ಲಿ. ಅಂದರೆ ಮೂರುವರ್ಷಗಳ ಹಿಂದಿನ ಲೆಕ್ಕಪತ್ರಗಳನ್ನು ಪಿಎಸಿ ಈಗ ಪರಿಶೀಲನೆ ನಡೆಸುತ್ತಿದೆ. ನಮ್ಮಲ್ಲಿನ ಪಿಎಸಿಗೆ ಬ್ರಿಟನ್ ಸಂಸತ್ ಮಾದರಿಯಾದರೂ ಅಲ್ಲಿನ ಎಲ್ಲ ನಿಯಮಾವಳಿಗಳನ್ನು ಇಲ್ಲಿ ಅಳವಡಿಸಲಾಗಿಲ್ಲ.

ಬ್ರಿಟನ್‌ನಲ್ಲಿ ಸರ್ಕಾರಿ ಇಲಾಖೆಗಳು ಪ್ರತಿವರ್ಷದ ಸೆಪ್ಟೆಂಬರ್ 30ರೊಳಗೆ ಲೆಕ್ಕಪತ್ರವನ್ನು ಸಿಎಜಿಗೆ ಸಲ್ಲಿಸುವುದು ಕಾನೂನು ಪ್ರಕಾರ ಕಡ್ಡಾಯ. ಮುಂದಿನ ಜನವರಿ ಅಂತ್ಯದೊಳಗೆ ದೃಢೀಕೃತ ಲೆಕ್ಕಪತ್ರವನ್ನು ಸಿಎಜಿ ಸಲ್ಲಿಸಬೇಕಾಗುತ್ತದೆ. ಆ ವರದಿಗಳನ್ನು ಎರಡು ತಿಂಗಳೊಳಗೆ ಪರಿಶೀಲನೆ ನಡೆಸಿ ಪಿಎಸಿ ತನ್ನ ವರದಿ ಸಲ್ಲಿಸಬೇಕೆಂಬ ನಿಯಮ ಇದೆ.
ಪಿಎಸಿಯ ಸುಧಾರಣೆ ನಡೆಯಬೇಕೆಂಬ ಕೂಗು ಬಹಳ ಕಾಲದಿಂದ ಕೇಳಿಬರುತ್ತಿದೆ. 
ಇದಕ್ಕೊಂದು ಸ್ಪಷ್ಟ ರೂಪು ನೀಡಿದ್ದು ನ್ಯಾಯಮೂರ್ತಿ ವೆಂಕಟಾಚಲಯ್ಯ ಅಧ್ಯಕ್ಷತೆಯ ಸಂವಿಧಾನ ಕಾರ್ಯನಿರ್ವಹಣೆಯ ಪುನರ್‌ಪರಿಶೀಲನೆಯ ರಾಷ್ಟ್ರೀಯ ಆಯೋಗ. ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯನ್ನು ಸಾಂವಿಧಾನಿಕ ಸಂಸ್ಥೆಯಾಗಿ ಪುನರ್‌ರಚಿಸಿ ಹಕ್ಕುಬಾಧ್ಯತೆಗಳನ್ನು ಸ್ಪಷ್ಟಪಡಿಸಬೇಕು, ಪಿಎಸಿಯ ಅಧಿಕಾರವಧಿಯನ್ನು ಲೋಕಸಭೆ ಮತ್ತು ವಿಧಾನಸಭೆಯ ರೀತಿಯಲ್ಲಿ ಐದು ವರ್ಷಗಳಿಗೆ ನಿಗದಿಗೊಳಿಸಬೇಕು ಹಾಗೂ ರಾಜ್ಯಸಭೆಯಲ್ಲಿರುವ ವ್ಯವಸ್ಥೆಯಂತೆ ಪ್ರತಿ ಎರಡು ವರ್ಷಗಳಿಗೊಮ್ಮೆ ಮೂರನೇ ಒಂದರಷ್ಟು ಸಮಿತಿ ಸದಸ್ಯರು ನಿವೃತ್ತರಾಗಿ ಹೊಸ ಸದಸ್ಯರ ನೇಮಕ ನಡೆಯಬೇಕು ಎಂದು ಆಯೋಗ ಶಿಫಾರಸು ಮಾಡಿದೆ.

ಇದರ ಜತೆಗೆ ಸರ್ಕಾರಿ ಇಲಾಖೆಗಳು ಧನವಿನಿಯೋಗ ಲೆಕ್ಕಪತ್ರಗಳನ್ನು ಸಂಸತ್ ಮತ್ತು ವಿಧಾನಮಂಡಲಗಳಿಗೆ ಹಣಕಾಸು ವರ್ಷದ ಅಂತ್ಯದೊಳಗೆ  ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದೊಮ್ಮೆ ಬಜೆಟ್ ನಿಗದಿಪಡಿಸಿದ್ದ ಅನುದಾನದ ಮಿತಿ ಮೀರಿ ಖರ್ಚು ಮಾಡಿದ್ದರೆ ಅದಕ್ಕೆ ಆ ಹಣಕಾಸು ವರ್ಷದೊಳಗೆ ಅಂಗೀಕಾರ ಪಡೆಯಬೇಕು ಎಂಬ ಸಲಹೆಗಳು ಕೂಡಾ ಇವೆ. ಈ ರೀತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಬಲವರ್ಧನೆ ನಡೆಸಬೇಕೆಂದು ಚರ್ಚೆ ನಡೆಯುತ್ತಿರುವಾಗಲೇ ಅದನ್ನು  ಇನ್ನಷ್ಟು ದುರ್ಬಲಗೊಳಿಸುವ ಪ್ರಯತ್ನ ಪ್ರಾರಂಭವಾಗಿದೆ. ಇದು ಸಂಚಲ್ಲದೆ ಮತ್ತೇನು?

Monday, April 25, 2011

ಕಲ್ಲೆಸೆದು ಕೆಸರು ಸಿಡಿಸಿಕೊಂಡವರು

‘ಕೆಸರಿಗೆ ಕಲ್ಲೆಸೆದು ಮುಖಕ್ಕೆ ಯಾಕೆ ಸಿಡಿಸಿಕೊಳ್ಳುತ್ತೀರಿ?’ ಎಂದು ಭ್ರಷ್ಟರ ವಿರುದ್ಧ ಹೋರಾಟಕ್ಕೆ ಹೊರಟ ಉತ್ಸಾಹಿಗಳಿಗೆ ಹಿರಿಯರು ಬುದ್ದಿ ಹೇಳುವುದುಂಟು. ಅಣ್ಣಾ ಹಜಾರೆ ಅವರಿಗೂ ಹಿರಿಯರು ಈ ಬುದ್ದಿ ಮಾತನ್ನು ಹಲವಾರು ಬಾರಿ ಹೇಳಿರಬಹದು.

ಅದಕ್ಕೆ ಕಿವಿಗೊಡದೆ ಅಣ್ಣಾ ಹಜಾರೆ ಅವರು ಭ್ರಷ್ಟಾಚಾರದ ವಿರುದ್ಧದ ತಮ್ಮ ಆಂದೋಲವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಅವರ ಹೋರಾಟ ಒಂದು ರಾಜ್ಯಕ್ಕಷ್ಟೇ ಸೀಮಿತವಾ ಗಿತ್ತು. ಅಲ್ಲಿಯೂ  ಶರದ್ ಪವಾರ್ ಅವರಂತಹ ಬಲಿಷ್ಠ ರಾಜಕಾರಣಿಯನ್ನು ಎದುರು ಹಾಕಿಕೊಂಡು ಮುಖಕ್ಕೆ ಒಂದಷ್ಟು ಕೆಸರು ಸಿಡಿಸಿಕೊಂಡಿದ್ದರು.ಈಗ ನೂರಾರು ‘ಪವಾರ್’ಗಳನ್ನು ಎದುರು ಹಾಕಿಕೊಂಡಿದ್ದಾರೆ.
‘ಸಾಮ್ರಾಜ್ಯ’ ತಿರುಗಿ ಹೊಡೆದಿದೆ. ಭ್ರಷ್ಟತೆಯ ಕೆಸರಲ್ಲಿ ಮುಳುಗಿ ಹೋಗಿರುವ ರಾಜಕೀಯ ವ್ಯವಸ್ಥೆಯನ್ನು ತೊಳೆಯಲು ಹೊರಟಿರುವ ಅಣ್ಣಾ ಮತ್ತು ಬೆಂಬಲಿಗರ ಮುಖದ ಮೇಲೆಲ್ಲ ಈಗ ಸಿಡಿದ ಕೆಸರಿನ ಕಲೆಗಳು. ಹಿಂದಡಿ ಇಡುವಂತಿಲ್ಲ, ಮುಂದೆ ಹೋಗಲು ದಾರಿಗಳು ಬಹಳ ಇಲ್ಲ.
ಇವೆಲ್ಲ ಅನಿರೀಕ್ಷಿತವೇ? ಬಹುಶಃ ಅಲ್ಲ. ‘....ರಾಜಕೀಯ ಪಕ್ಷಗಳು  ಮೈಯೆಲ್ಲ ಕಣ್ಣಾಗಿ ಅಣ್ಣಾ ಹಜಾರೆ ಮತ್ತು ಬೆಂಬಲಿಗರ ತಪ್ಪು ಹೆಜ್ಜೆಗಾಗಿ ಕಾಯುತ್ತಾ ಕೂತ ಹಾಗೆ ಕಾಣುತ್ತಿದೆ....’ ಎಂದು ಎರಡು ವಾರಗಳ ಹಿಂದೆ ಇದೇ ಅಂಕಣದಲ್ಲಿ ಬರೆದದ್ದನ್ನು ಓದಿ ‘ನಿರಾಶವಾದ ಅತಿಯಾಯಿತು’ ಎಂದವರೂ ಇದ್ದರು.
ಆದರೆ ಈ ದೇಶದ ರಾಜಕೀಯ ವ್ಯವಸ್ಥೆಯನ್ನು ತುಸು ಹತ್ತಿರದಿಂದ ನೋಡಿದ ಯಾರೂ ಅಣ್ಣಾ ಹಜಾರೆ  ಎದುರು ಸರ್ಕಾರ ಸೋಲು ಒಪ್ಪಿಕೊಂಡಿತು ಎಂದು ಸಂಭ್ರಮಿಸುವ ಆತುರ ತೋರಿಸಲಾರರು.

ಜನ ಲೋಕಪಾಲ ಮಸೂದೆ ರಚನಾ ಸಮಿತಿಯಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಸೇರಿಸಿಕೊಳ್ಳಲು ಒಪ್ಪಿಕೊಂಡದ್ದನ್ನೇ ದೊಡ್ಡ ಗೆಲುವೆಂದು ಭ್ರಮಿಸಿ ಅಣ್ಣಾ ಹಜಾರೆ ಅವರ ಕೆಲ ಮುಗ್ಧ ಬೆಂಬಲಿಗರು ಕುಣಿದಾಡಿದ್ದರು.
ಆದರೆ ಆಗಲೇ ‘ಸಾಮ್ರಾಜ್ಯ’ ತನ್ನ ಹತಾರುಗಳನ್ನು ಸಾಣೆ ಹಿಡಿಯುತ್ತಿತ್ತು ಎಂದು ಅವರಿಗೆ ತಿಳಿದಿರಲಿಲ್ಲ. ಅಣ್ಣಾ ಹಜಾರೆ ಅವರ ಉಪವಾಸ ಸತ್ಯಾಗ್ರಹದ ಬಾಣದಿಂದ ಪ್ರಾಣ ಉಳಿಸಿಕೊಳ್ಳಲು ಸರ್ಕಾರ ತಲೆಯನ್ನು ಒಂದಿಷ್ಟು ಕೆಳಗೆ ತಗ್ಗಿಸಿತ್ತು ಅಷ್ಟೆ.  ಅದು ಪ್ರತಿ ದಾಳಿ ಪೂರ್ವದ ಸಮರ ತಂತ್ರ.
ಭಾರತದ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಹಳೆಯ ವಿವಾದ. ಇದರಿಂದಾಗಿ ಈ ವಿವಾದದ ಸುತ್ತಲಿನ ಚರ್ಚೆ ಬಹಳ ಬೇಗ ಸಾರ್ವಜನಿಕರ ಗಮನ ಸೆಳೆಯುತ್ತದೆ.ಈಗ ವಿವಾದದ ಕೇಂದ್ರಬಿಂದುವಾಗಿರುವ ಹಿರಿಯ ವಕೀಲ ಶಾಂತಿಭೂಷಣ್ ಕೂಡಾ ಒಂದು ಕಾಲದಲ್ಲಿ ಇಂದಿರಾ ಗಾಂಧಿ ಅವರ ಕುಟುಂಬ ರಾಜಕೀಯದ ವಿರುದ್ಧ ದನಿ ಎತ್ತಿದವರು. ಇಷ್ಟೆಲ್ಲ ಗೊತ್ತಿದ್ದೂ ಅಣ್ಣಾ ಹಜಾರೆ ಆಗಲೇ ಒಂದು ತಪ್ಪು ಹೆಜ್ಜೆ ಇಟ್ಟಿದ್ದರು.

ಶಾಂತಿಭೂಷಣ್ ಮತ್ತು ಅವರ ಮಗ ಪ್ರಶಾಂತ್ ಭೂಷಣ್ ಅವರನ್ನು ಲೋಕಪಾಲ ಮಸೂದೆ ರಚನಾ ಸಮಿತಿಗೆ ಸೇರಿಸಿಬಿಟ್ಟಿದ್ದರು. ನೂರು ಕೋಟಿ ನಾಗರಿಕ ಸಮಾಜದ ಪ್ರತಿನಿಧಿಗಳಾಗಿ ನೇಮಕಗೊಂಡ ಐವರು ಸದಸ್ಯರಲ್ಲಿ ಒಂದೇ ಕುಟುಂಬದ ಇಬ್ಬರು. ಕಾರಣಗಳೇನೇ ಇರಬಹುದು, ಸಾರ್ವಜನಿಕವಾಗಿ ಇದನ್ನು ಸಮರ್ಥಿಸಿಕೊಳ್ಳುವುದು ಕಷ್ಟ. ಅಲ್ಲಿಂದ ಪ್ರಾರಂಭವಾಯಿತು ಪ್ರತಿ ದಾಳಿ.

ಇವೆಲ್ಲವೂ ಕೇವಲ ಆಡಳಿತಾರೂಢರ ಹುನ್ನಾರ ಎಂದು ತಿಳಿದುಕೊಳ್ಳಬೇಕಾಗಿಲ್ಲ.ಬಹಿರಂಗವಾಗಿ ಅಣ್ಣಾ ಹಜಾರೆ ಚಳವಳಿಗೆ ಬೆಂಬಲ ಘೋಷಿಸಿರುವ ವಿರೋಧ ಪಕ್ಷಗಳು ಕೂಡಾ ಅಂತರಂಗದಲ್ಲಿ ಅದನ್ನು ಮುರಿಯಲು ಗುಪ್ತ ಬೆಂಬಲ ನೀಡುತ್ತಿವೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಮತ ಪಡೆದು ಅಧಿಕಾರಕ್ಕೆ ಬಂದಿದ್ದ ಎನ್‌ಡಿಎ ಸರ್ಕಾರದ ಮೊದಲ ಆದ್ಯತೆಯೇ ಲೋಕಪಾಲ ಮಸೂದೆಗೆ ಕಾನೂನಿನ ರೂಪ ಕೊಡುವುದು ಆಗಬೇಕಾಗಿತ್ತು.

ಆದರೆ ಹಾಗಾಗಲಿಲ್ಲ. ಆಗಲೂ ಪ್ರಧಾನಿಯನ್ನು ಲೋಕಪಾಲರ ವ್ಯಾಪ್ತಿಯಿಂದ ಹೊರಗಿಡಬೇಕೆಂಬುದು ಬಿಜೆಪಿಯ ಅಧಿಕೃತ ನಿಲುವಾಗಿತ್ತು ಎನ್ನುವುದನ್ನು ಈಗ ಎಲ್ಲರೂ ಮರೆತುಬಿಟ್ಟಿದ್ದಾರೆ.
ಅಣ್ಣಾ ಹಜಾರೆ ವಿರುದ್ಧ ಮೊದಲು ಎರಗಿಬಿದ್ದವರು ಕೂಡಾ ಕಾಂಗ್ರೆಸ್ ಪಕ್ಷದ ಪ್ರಮುಖ ಟೀಕಾಕಾರರಾದ ಯೋಗಗುರು ಬಾಬಾ ರಾಮ್‌ದೇವ್. ಇವರಿಗೆ ಸಲಹೆಗಾರರಾಗಿರುವವರು ಬಿಜೆಪಿಯಿಂದ ಹೊರ ಹೋಗಿದ್ದರೂ ಸಂಘ ಪರಿವಾರದ ಜತೆ ಸಂಬಂಧ ಇಟ್ಟುಕೊಂಡಿರುವ ಗೋವಿಂದಾಚಾರ್ಯ ಮತ್ತು ಹವ್ಯಾಸಿ ಪತ್ರಕರ್ತ ಎಸ್.ಗುರುಮೂರ್ತಿ. ಎರಡು ದಿನಗಳ ಮೊದಲು ಹೋಗಿ ಅಣ್ಣಾ ಹಜಾರೆ ಅವರನ್ನು ಅಪ್ಪಿಕೊಂಡಿದ್ದ ರಾಮ್‌ದೇವ್ ಯಾಕೆ ತಿರುಗಿಬಿದ್ದರು ಎನ್ನುವುದಕ್ಕೂ ಹಿನ್ನೆಲೆ ಇದೆ.
ಮೊದಲನೆಯದಾಗಿ ರಾಜಕೀಯ ಪಕ್ಷ ಕಟ್ಟಲು ಹೊರಟಿದ್ದ ರಾಮ್‌ದೇವ್ ಅವರ ಪ್ರಯತ್ನಕ್ಕೆ ಅಣ್ಣಾ ಹಜಾರೆ ಅವರ ದಿಢೀರ್ ರಂಗಪ್ರವೇಶದಿಂದಾಗಿ ಹಿನ್ನಡೆಯಾಗಿದೆ. ಕಳೆದೆರಡು ವಾರಗಳಲ್ಲಿ ಅವರ ದನಿ ಬದಲಾಗಿರುವುದನ್ನು ಗಮನಿಸಬಹುದು.

‘ಹೊಸ ರಾಜಕೀಯ ಪಕ್ಷ ಕಟ್ಟುವುದಿಲ್ಲ, ಈಗಿರುವ ಪಕ್ಷಗಳಿಂದಲೇ ಒಳ್ಳೆಯ ಕೆಲಸ ಮಾಡಿಸಲು ಜನಬಲದ ಮೂಲಕ ಒತ್ತಡ ಹಾಕುತ್ತೇವೆ’ ಎಂದು ಯೋಗಗುರು ಹೇಳುತ್ತಿದ್ದಾರೆ. ಗೋವಿಂದಾಚಾರ್ಯರ ಶಿಷ್ಯೆ ಉಮಾಭಾರತಿ ಅವರನ್ನು ಅಣ್ಣಾ ಹಜಾರೆ ಬೆಂಬಲಿಗರು ಹತ್ತಿರಕ್ಕೆ ಬಿಟ್ಟು ಕೊಡದಿರುವುದು ಕೂಡಾ ರಾಮ್‌ದೇವ್ ಅಸಮಾಧಾನಕ್ಕೆ ಕಾರಣ ಆಗಿರಬಹುದು.
ಬಾಬಾ ರಾಮ್‌ದೇವ್ ಅವರು ನೇಪಥ್ಯಕ್ಕೆ ಸರಿಯುತ್ತಿದ್ದಂತೆಯೇ ಇಂತಹ ಆಟಗಳಲ್ಲಿ ಪಳಗಿರುವ ಅಮರ್ ಸಿಂಗ್ ಎಂಬ ರಾಜಕೀಯ ದಲ್ಲಾಳಿಯ ಪ್ರವೇಶವಾಗಿದೆ. ಇದು ಕೂಡಾ ರಾಜಕೀಯ ಸಮರದ ಹಳೆಯ ತಂತ್ರ. ಯುದ್ಧಭೂಮಿಯಲ್ಲಿ ಭೀಷ್ಮಾಚಾರ್ಯರ ಎದುರು ಶಿಖಂಡಿಯನ್ನು ತಂದು ನಿಲ್ಲಿಸಿದ ಹಾಗೆ.
ಅಮರ್‌ಸಿಂಗ್ ಅವರಿಗೆ ಶಾಂತಿಭೂಷಣ್ ಬಗ್ಗೆ ಮೊದಲೇ ಹಳೆಯ ದ್ವೇಷ ಇತ್ತು. ಇದಕ್ಕಿಂತಲೂ ಮಿಗಿಲಾಗಿ ಮುಲಾಯಂ ಸಿಂಗ್ ಕೈಬಿಟ್ಟ ನಂತರ ಮೂಲೆಗುಂಪಾಗಿದ್ದ ಅವರಿಗೆ ರಾಜಕೀಯವಾಗಿ ಜೀವದಾನ ಬೇಕಾಗಿತ್ತು. ಉತ್ತರಪ್ರದೇಶದಲ್ಲಿ ಕಾಲೂರಲು ಪ್ರಯತ್ನಿಸುತ್ತಲೇ ಇರುವ ಕಾಂಗ್ರೆಸ್ ಪಕ್ಷಕ್ಕೆ ಮಾಯಾವತಿ ಮತ್ತು ಮುಲಾಯಂ ಸಿಂಗ್ ಅವರನ್ನು ಎದುರು ಹಾಕಿಕೊಂಡಿರುವ ಜತೆಗೆ ಠಾಕೂರ್ ಸಮುದಾಯದ ಮತಗಳನ್ನು ಸೆಳೆಯಬಲ್ಲ ನಾಯಕನೊಬ್ಬ ಬೇಕಿತ್ತು.

ಇವೆಲ್ಲವೂ ಒಟ್ಟಾಗಿ ಅಮರ್‌ಸಿಂಗ್ ಕಾಂಗ್ರೆಸ್ ನಾಯಕರ ಕೈ ದಾಳವಾಗಿ ಬಿಟ್ಟರು.ಅಮರ್‌ಸಿಂಗ್ ಮೊದಲು ‘ಸಿಡಿ’ಯೊಂದನ್ನು ಹೊರಹಾಕಿದರು. ಅದರಲ್ಲಿ ಶಾಂತಿಭೂಷಣ್ ಅವರು ಮಗನ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಒಲಿಸಿಕೊಳ್ಳುವ ಭರವಸೆ ನೀಡಿರುವ ಸಂಭಾಷಣೆ ಇದೆ.
ಅದರ ಬೆನ್ನಲ್ಲೇ ಉತ್ತರಪ್ರದೇಶದ ಮಾಯಾವತಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದಿರುವ ಪ್ರಕರಣ ಬಯಲಾಗಿದೆ. ಈಗ ಆಸ್ತಿ ಖರೀದಿಯಲ್ಲಿ ಸರ್ಕಾರಕ್ಕೆ ಮುದ್ರಾಂಕ ಶುಲ್ಕ ವಂಚಿಸಿರುವ ಆರೋಪ ಎದುರಾಗಿದೆ.
ಹಿರಿಯ ವಕೀಲರಾದ ಶಾಂತಿಭೂಷಣ್ ಮತ್ತು ಮಕ್ಕಳು ಕೇವಲ ದುಡ್ಡು ಸಂಪಾದನೆಗಾಗಿಯೇ ವಕೀಲಿ ವೃತ್ತಿ ಮಾಡಿಕೊಂಡವರಲ್ಲ. ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನೆತ್ತಿಕೊಂಡು ಕಾನೂನು ಹೋರಾಟ ನಡೆಸುತ್ತಾ ಬಂದವರು.
ನ್ಯಾಯಮೂರ್ತಿಗಳ ಭ್ರಷ್ಟಾಚಾರದ ವಿರುದ್ಧವೂ ದನಿ ಎತ್ತಿ ಅಪಾಯವನ್ನು ಮೈಮೇಲೆ ಎಳೆದುಕೊಂಡವರು. ಅವರು ಹೇಳುತ್ತಿರುವಂತೆ ಅಮರ್‌ಸಿಂಗ್ ಸಿಡಿ ನಕಲಿಯೂ ಇರಬಹುದು, ಉತ್ತರಪ್ರದೇಶ ದಲ್ಲಿ ಪಡೆದಿರುವ ಜಮೀನು ಮಾರುಕಟ್ಟೆ ಬೆಲೆಗೆ ಖರೀದಿಸಿರಬಹುದು. ಮುದ್ರಾಂಕ ಶುಲ್ಕ ವಂಚಿಸದೆಯೂ ಇರಬಹುದು.
ಆದರೆ ಯಾವುದೇ ಚುನಾವಣೆ ಇಲ್ಲದೆ ನೂರು ಕೋಟಿ ನಾಗರಿಕರ ಪ್ರತಿನಿಧಿಗಳಾಗಿ ಲೋಕಪಾಲ ರಚನಾ ಸಮಿತಿಯ ಸದಸ್ಯರಾಗಿ ನೇಮಕ ಗೊಂಡವರ ಮೇಲೆ ಈ ರೀತಿಯ ಸಂಶಯದ ನೆರಳೂ ಚಾಚಬಾರದಲ್ಲವೇ? ಯಾಕೆಂದರೆ ಅಣ್ಣಾ ಹಜಾರೆ ಅವರ ಹೋರಾಟ ಕಾನೂನಿ ನದ್ದಲ್ಲ, ಅದು ನೈತಿಕತೆಯದ್ದು.

ಶರದ್‌ಪವಾರ್ ಸೇರಿದಂತೆ ಅಣ್ಣಾ ಹಜಾರೆ ಅವರು ಗುರಿ ಇಟ್ಟಿರುವ ರಾಜಕಾರಣಿಗಳು ಹೊಂದಿರುವ ಕೋಟ್ಯಂತರ ರೂಪಾಯಿ ಮೌಲ್ಯದ  ಆಸ್ತಿ ಅಕ್ರಮವಾಗಿ ಗಳಿಸಿದ್ದೆಂದು ಎಲ್ಲಿ ಸಾಬೀತಾಗಿದೆ? ಲೋಕಪಾಲರ ನೇಮಕ ಕೂಡಾ ಭ್ರಷ್ಟರ ವಿರುದ್ಧದ ನೈತಿಕ ಹೋರಾಟದ ಒಂದು ಭಾಗ ಅಲ್ಲವೇ?
ಶಾಂತಿಭೂಷಣ್ ಮತ್ತು ಪ್ರಶಾಂತ್ ಭೂಷಣ್ ನಂತರ ಕೆಸರೆರಚಾಟಕ್ಕೆ ಬಲಿಯಾದವರು ಕರ್ನಾಟಕದ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ. ಕರ್ನಾಟಕದಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತರಿಗೆ ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್ ಕೆಣಕಿದ್ದೇ ತಡ, ನ್ಯಾ.ಹೆಗ್ಡೆ ಅವರು ಕೆಂಡಾಮಂಡಲವಾಗಿಬಿಟ್ಟರು.
ಇದೇ ಅಭಿಪ್ರಾಯವನ್ನು ಇನ್ನೊಂದು ರೀತಿಯಲ್ಲಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯಿಲಿ ಅವರು ಕೆಲವು ವಾರಗಳ ಹಿಂದೆ ಹೇಳಿದ್ದಾಗಲೂ ವಿವಾದ ಸೃಷ್ಟಿಯಾಗಿತ್ತು. ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವೈಯಕ್ತಿಕವಾದ ಪ್ರಾಮಾಣಿಕತೆಯನ್ನಾಗಲಿ, ಕ್ಷಮತೆಯನ್ನಾಗಲಿ ಯಾರೂ ಪ್ರಶ್ನಿಸುವ ಹಾಗಿಲ್ಲ.
ಹಾಗಿದ್ದರೂ ಯಾಕೆ ಅವರನ್ನು ಕೆಣಕುವಂತಹ ಚುಚ್ಚುಮಾತುಗಳು ತೂರಿಬರುತ್ತಿವೆ? ಇದಕ್ಕೆ ಸ್ವಲ್ಪಮಟ್ಟಿಗೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರೂ ಕಾರಣ.ರಾಜ್ಯ ಸರ್ಕಾರದ ಅಸಹಕಾರದಿಂದ ನೊಂದು ಹತ್ತು ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ನೀಡಿದಾಗ ನ್ಯಾ. ಸಂತೋಷ್‌ಹೆಗ್ಡೆ ದೇಶದ ಗಮನ ಸೆಳೆದಿದ್ದರು. ಅದು ಅವರ ಜನಪ್ರಿಯತೆಯ ಉತ್ತುಂಗ ಸ್ಥಿತಿ.

ಆದರೆ ಕರ್ನಾಟಕದ ಜನತೆ ಮಾತ್ರವಲ್ಲ, ಇಡೀ ದೇಶದ ಪ್ರಜ್ಞಾವಂತರು ರಾಜೀನಾಮೆ ಹಿಂತೆಗೆದುಕೊಳ್ಳಲು ಒತ್ತಾಯಿಸಿದಾಗಲೂ ಜಗ್ಗದ ಅವರು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮಾತಿಗೆ ಮಣಿದು ರಾಜೀನಾಮೆ ಹಿಂತೆಗೆದುಕೊಂಡರು.
ಮರುಗಳಿಗೆಯಿಂದ ಅವರ ಜನಪ್ರಿಯತೆ ಕುಸಿಯತೊಡಗಿತ್ತು. ಅಲ್ಲಿಯ ವರೆಗೆ ಲೋಕಾಯುಕ್ತರ ಬಗ್ಗೆ ಮಾತನಾಡಲು ಹಿಂಜರಿಯುತ್ತಿದ್ದವರೂ ನಂತರದ ದಿನಗಳಲ್ಲಿ ನಾಲಿಗೆ ಸಡಿಲ ಬಿಡತೊಡಗಿದ್ದರು. ತಮ್ಮನ್ನು ಕೆಣಕಲೆಂದೇ ಇಂತಹ ಚುಚ್ಚುಮಾತುಗಳನ್ನು ತೂರಿಬಿಡಲಾಗುತ್ತಿದೆ ಎಂದು ಗೊತ್ತಿದ್ದರೂ ನ್ಯಾ.ಸಂತೋಷ್‌ಹೆಗ್ಡೆ ಅವುಗಳಿಗೆ ಭಾವಾವೇಶದಿಂದ ಪ್ರತಿಕ್ರಿಯಿಸುತ್ತಾ ಬಂದಿದ್ದಾರೆ.
ದಿಗ್ವಿಜಯ್‌ಸಿಂಗ್ ಟೀಕೆಗೆ ಪ್ರತಿಕ್ರಿಯಿಸಿದ ರೀತಿಯಲ್ಲಿಯೂ ಈ ಭಾವಾವೇಶ ಇತ್ತು.ಒಮ್ಮೊಮ್ಮೆ ಸಾತ್ವಿಕರ ಮೌನ ಕೂಡಾ ಅವರ ಟೀಕಾಕಾರರ ಬಾಯಿಮುಚ್ಚಿಸುವಷ್ಟು ಪರಿಣಾಮಕಾರಿಯಾಗಿರುತ್ತದೆ ಎಂಬುದು ಲೋಕಾಯುಕ್ತರಿಗೆ ಯಾಕೋ ಮನವರಿಕೆಯಾದಂತಿಲ್ಲ.
ಇವರನ್ನೆಲ್ಲ ಕಟ್ಟಿಕೊಂಡಿರುವ ಅಣ್ಣಾ ಹಜಾರೆ ಅವರೂ ಆರೋಪ ಮುಕ್ತರಾಗಿಲ್ಲ. ಅಣ್ಣಾ ಹಜಾರೆ ಅಧ್ಯಕ್ಷರಾಗಿರುವ ಹಿಂದ್ ಸ್ವರಾಜ್ ಟ್ರಸ್ಟ್‌ನ ಖಾತೆಯಲ್ಲಿದ್ದ 2.2 ಲಕ್ಷ ರೂಪಾಯಿಗಳನ್ನು ಅವರ ಹುಟ್ಟುಹಬ್ಬ ಆಚರಣೆಗೆ ಬಳಸಲಾಗಿತ್ತಂತೆ. ಈ ಬಗ್ಗೆ 2005ರಲ್ಲಿ ತನಿಖೆ ಮಾಡಿದ ಸಾವಂತ್ ಆಯೋಗ ಈ ಆರೋಪ ನಿಜ ಎಂದು ವರದಿ ನೀಡಿದೆ.
ರಾಜಕಾರಣಿಗಳು, ಉದ್ಯಮಿಗಳು, ಚಿತ್ರತಾರೆಯರು ತಮ್ಮ ಹುಟ್ಟುಹಬ್ಬದ ಆಚರಣೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿರುವಾಗ ಈ ಎರಡು ಲಕ್ಷ ರೂಪಾಯಿ ಯಾವ ಲೆಕ್ಕದ್ದು ಎಂದು ಪ್ರಶ್ನಿಸಬಹುದು. ಖರ್ಚಾಗಿರುವ ಹಣವನ್ನು ಅಣ್ಣಾ ಹಜಾರೆ ಸ್ವಂತಕ್ಕಾಗಿ ಬಳಸಿಕೊಳ್ಳಲಿಲ್ಲ ಎಂದು ಸಮರ್ಥಿಸಿಕೊಳ್ಳಲೂ ಬಹುದು.
ಆದರೆ ಅಣ್ಣಾ ಹಜಾರೆ ಅವರಲ್ಲಿ ಗಾಂಧೀಜಿಯನ್ನು ಕಾಣಬಯಸುವ ಕೋಟ್ಯಂತರ ಜನರ ಕಣ್ಣಿನಲ್ಲಿ ಇಂತಹ ಸಣ್ಣ ತಪ್ಪುಗಳು ಭ್ರಮನಿರಸನವನ್ನು ಉಂಟುಮಾಡಬಲ್ಲದು. ಯಾಕೆಂದರೆ ಹಣಕಾಸಿನ ವಿಷಯದಲ್ಲಿ ಗಾಂಧೀಜಿ ಇಂತಹ ಸಣ್ಣ ತಪ್ಪುಗಳನ್ನೂ ಮಾಡಿರಲಿಲ್ಲ.

ಸುಮಾರು 30 ವರ್ಷಗಳ ಕಾಲ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಮತ್ತು ಇದಕ್ಕಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕ ದೇಣಿಗೆಯನ್ನು ಸಂಗ್ರಹಿಸಿದ್ದ ಗಾಂಧೀಜಿ ವಿರುದ್ಧ ಯಾರೂ ಹಣ ದುರುಪಯೋಗದ ಸಣ್ಣ ಸೊಲ್ಲು ಕೂಡಾ ಎತ್ತಿರಲಿಲ್ಲ.

ಇದನ್ನು ನೋಡಿಯೇ ಆಲ್‌ಬರ್ಟ್ ಐನ್‌ಸ್ಟೀನ್ ‘ರಕ್ತ ಮೂಳೆ ಮಾಂಸಗಳನ್ನು ಹೊಂದಿದ್ದ ಇಂತಹ ವ್ಯಕ್ತಿ ಜಗತ್ತಿನಲ್ಲಿ ಸಂಚರಿಸಿದ್ದನೇ, ಬದುಕಿದ್ದನೇ ಎಂದು ಮುಂಬರುವ ಪೀಳಿಗೆ ಸಂಶಯಪಡಬಹುದು’ ಎಂದು ಉದ್ಗರಿಸಿದ್ದು.

ಭ್ರಷ್ಟಾಚಾರ ನಿರ್ಮೂಲನೆ ಈಗಲೂ ಸಾಧ್ಯ. ಅದಕ್ಕಾಗಿ ಮಹಾತ್ಮ ಗಾಂಧೀಜಿಯವರಂತಹ ನಾಯಕರ ಅಗತ್ಯ ಇದೆ. ಅವರನ್ನು ಎಲ್ಲಿಂದ ತರುವುದು?

Monday, April 18, 2011

ಗಾಂಧಿ,ಜೆಪಿ ಆಗುವ ಕಷ್ಟದ ಕೆಲಸ

‘ಈಗಿನ ಸನ್ನಿವೇಶದಲ್ಲಿ ಗಾಂಧೀಜಿ ಇದ್ದಿದ್ದರೆ ಅವರು ಸಾರ್ವಜನಿಕ ಜೀವನವನ್ನು ತ್ಯಜಿಸಬೇಕಾಗುತ್ತಿತ್ತು ಇಲ್ಲವೇ ಅವರೂ ಭ್ರಷ್ಟರಾಗುತ್ತಿದ್ದರು’ ಎಂದು ರಾಜ್ಯ ಜೆಡಿ (ಎಸ್) ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದಾಕ್ಷಣ ಅವರ ಮೇಲೆ ‘ಗಾಂಧಿ ಅಭಿಮಾನಿ’ಗಳೆಲ್ಲ ಮುಗಿಬಿದ್ದುಬಿಟ್ಟರು.
ಈ ರೀತಿ ದಾಳಿ ಮಾಡಿದವರಲ್ಲಿ ಗಾಂಧೀಜಿ ಅಭಿಮಾನಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕುಮಾರಸ್ವಾಮಿಗಳ  ದ್ವೇಷಿಗಳು ಇದ್ದಿರಬಹುದು. ಒಮ್ಮೊಮ್ಮೆ ಸಂದೇಶವಾಹಕನ ಚಾರಿತ್ರ್ಯ, ಸಂದೇಶದ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ. ಕುಮಾರಸ್ವಾಮಿಯವರು ಹೇಳಿದ್ದರಲ್ಲಿ ಅರ್ಧ ಸತ್ಯ ಇತ್ತು, ಇದಕ್ಕೆ ಗಾಂಧೀಜಿ ಬಗೆಗಿನ ಅವರ ಅರ್ಧಂಬರ್ಧ ತಿಳುವಳಿಕೆ ಕಾರಣ ಇರಬಹುದು.
ಗಾಂಧೀಜಿ ಈಗಿನ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡಿ ಅಲ್ಲಿಯೇ ಉಳಿಯಬೇಕೆಂದು ಬಯಸಿದ್ದರೆ ಭ್ರಷ್ಟರಾಗಬೇಕಾಗುತ್ತಿತ್ತೋ ಏನೋ? ಅಷ್ಟರ ಮಟ್ಟಿಗೆ ಕುಮಾರಸ್ವಾಮಿ ಹೇಳಿರುವುದು ಸತ್ಯ. ಆದರೆ ಗಾಂಧೀಜಿ ಈಗ ನಮ್ಮ ನಡುವೆ ಇದ್ದಿದ್ದರೂ ಖಂಡಿತ ಈಗಿನ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡುತ್ತಿರಲಿಲ್ಲ. ಹಾಗೆಯೇ ಅವರು ಸಾರ್ವಜನಿಕ ಜೀವನವನ್ನು ತ್ಯಜಿಸಿ ಓಡಿಹೋಗುತ್ತಲೂ ಇರಲಿಲ್ಲ.
ಇದು ನಾವೆಲ್ಲ ಅರ್ಥಮಾಡಿಕೊಳ್ಳಬೇಕಾದ ಪೂರ್ಣ ಸತ್ಯ. ಇಡೀ ದೇಶ ಸ್ವಾತಂತ್ರ್ಯ ಪಡೆದ ಸಂಭ್ರಮದಲ್ಲಿದ್ದಾಗ ಮತ್ತು ತಮ್ಮ ಅನುಯಾಯಿಗಳೆಲ್ಲ ಅಧಿಕಾರದ ಕುರ್ಚಿ ಹಿಡಿಯುವ ತರಾತುರಿಯಲ್ಲಿದ್ದಾಗ ಗಾಂಧೀಜಿಯವರು ನೌಕಾಲಿಯಲ್ಲಿ ಭುಗಿಲೆದ್ದಿದ್ದ ಕೋಮುದ್ವೇಷದ ಬೆಂಕಿಯನ್ನು ಶಮನಮಾಡಲು ಏಕಾಂಗಿಯಾಗಿ  ಹೆಣಗಾಡುತ್ತಿದ್ದರು. ಆಗ ದೆಹಲಿಯಲ್ಲಿದ್ದ ಗಾಂಧಿ ಅನುಯಾಯಿಗಳ ಪಾಲಿಗೆ ಸರ್ಕಾರ ರಚನೆಯೇ ರಾಜಕೀಯ ಆಗಿದ್ದರೆ, ಗಾಂಧೀಜಿ ಅವರಿಗೆ ಒಡೆದ ಮನಸ್ಸುಗಳನ್ನು ಒಗ್ಗೂಡಿಸಿ ಕೋಮುಸೌಹಾರ್ದತೆಯನ್ನು ಸ್ಥಾಪಿಸುವುದು ರಾಜಕೀಯ ಆಗಿತ್ತು. ಗಾಂಧೀಜಿ ಈಗ ಬದುಕಿದ್ದರೂ ಅವರು ಸಂಸತ್‌ನೊಳಗೆ ಪ್ರವೇಶಿಸಿ ರಾಜಕೀಯ ಮಾಡುತ್ತಿರಲಿಲ್ಲ, ಅಲ್ಲಿಗೆ ಸಮೀಪದಲ್ಲಿಯೇ ಇರುವ ಜಂತರ್‌ಮಂತರ್‌ನ ಸತ್ಯಾಗ್ರಹದ ಶಿಬಿರದಲ್ಲಿ ಕುಳಿತು ರಾಜಕೀಯ ಮಾಡುತ್ತಿದ್ದರು.
ಸಾರ್ವಜನಿಕ ಜೀವನ, ಚುನಾವಣಾ ರಾಜಕೀಯ, ಹೋರಾಟದ ರಾಜಕೀಯ, ಚಳುವಳಿ, ಸತ್ಯಾಗ್ರಹಗಳೆಲ್ಲವನ್ನೂ ಒಂದೇ ಬಗೆಯ ‘ರಾಜಕೀಯ’ ಎಂದು ತಿಳಿದುಕೊಂಡಿರುವುದೇ ಕುಮಾರಸ್ವಾಮಿ ಮತ್ತು ಅವರಂತಹವರ ಗೊಂದಲಕಾರಿ ಹೇಳಿಕೆಗಳಿಗೆ ಕಾರಣ. ಅವರು ಮಾತ್ರವಲ್ಲ ಲಾಲ್‌ಕೃಷ್ಣ ಅಡ್ವಾಣಿಯವರಂತಹ ಅನುಭವಿ ರಾಜಕಾರಣಿ ಕೂಡಾ ಹಜಾರೆ ಅವರ ಚಳುವಳಿ ರಾಜಕೀಯದ ಬಗ್ಗೆ ದ್ವೇಷ-ಸಿನಿಕತನ ಹುಟ್ಟಿಸುತ್ತಿದೆಯೇನೋ ಎಂದು ಆತಂಕ ವ್ಯಕ್ತಪಡಿಸುವಷ್ಟು ಮಟ್ಟಿಗೆ ಗೊಂದಲಕ್ಕೆಡಾಗಿದ್ದಾರೆ. ಇದರ ಜತೆಗೆ ಅಣ್ಣಾ ಹಜಾರೆ ಅವರು ರಾಜಕೀಯ ಪ್ರವೇಶ ಮಾಡಬಾರದೆಂದು ಹೇಳುವುದು ಎಷ್ಟು ಸರಿ?
ಹಾಗಿದ್ದರೆ ಪ್ರಾಮಾಣಿಕರೆಲ್ಲರೂ ರಾಜಕೀಯವನ್ನು ಭ್ರಷ್ಟರಿಗೆ ಬಿಟ್ಟುಕೊಟ್ಟು ಮೂಕಪ್ರೇಕ್ಷಕರಾಗಬೇಕೇ? ಪ್ರಜಾಪ್ರಭುತ್ವದಲ್ಲಿ ರಾಜಕೀಯ ಚಟುವಟಿಕೆಯ ಮೂಲಕವೇ ಬದಲಾವಣೆ ತರಬೇಕಲ್ಲವೇ? ಎಂಬೀತ್ಯಾದಿ ಪ್ರಶ್ನೆಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಇವು ರಾಜಕೀಯವನ್ನು ತೀರಾ ಸರಳೀಕರಿಸಿ ನೋಡುವ ಮುಗ್ಧಪ್ರಶ್ನೆಗಳು ಎಂದು ತಳ್ಳಿಹಾಕಬಹುದು. ಆದರೆ ಈ ರೀತಿ ಪ್ರಶ್ನಿಸುತ್ತಿರುವವರಲ್ಲಿ ಹೆಚ್ಚಿನವರು ಯುವಕರು, ಭ್ರಷ್ಟಾಚಾರವನ್ನು ಹೊಡೆದೋಡಿಸಬೇಕು ಎಂಬ ರೋಷದ ಜತೆಯಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ರಾಜಕೀಯ ಬದಲಾವಣೆ ಮಾಡಬೇಕೆಂಬ ಹಂಬಲ ಉಳ್ಳ ಅಮಾಯಕರು. ಆದ್ದರಿಂದಲೇ ಈ ಪ್ರತಿಕ್ರಿಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಈ ಗೊಂದಲಗಳಿಗೆ ಮೂಲ ಕಾರಣ ಏನೆಂದರೆ ರಾಜಕೀಯ ಎಂದಾಕ್ಷಣ ನಮ್ಮ ಕಣ್ಣೆದುರು ಮೂಡುವ ಶಾಸಕರು,ಸಂಸದರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಇಲ್ಲವೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ಚಿತ್ರಗಳು. ರಾಜಕೀಯ ಎಂದಾಕ್ಷಣ ಯಾರ ಕಣ್ಣಮುಂದೆಯೂ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಗಾಂಧೀಜಿ ಇಲ್ಲವೇ ಆ ಸ್ವಾತಂತ್ರ್ಯ ಗಂಡಾಂತರ ಸ್ಥಿತಿಯಲ್ಲಿದ್ದಾಗ ಅದನ್ನು ರಕ್ಷಿಸಿಕೊಟ್ಟ ಜಯಪ್ರಕಾಶ್ ನಾರಾಯಣ್ ಚಿತ್ರಗಳು ಕಣ್ಣಮುಂದೆ ಮೂಡುವುದಿಲ್ಲ. ಆದರೆ ಈ ಇಬ್ಬರೂ ನಾಯಕರು ದೇಶ ಕಂಡ ಅತ್ಯಂತ ಬುದ್ದಿವಂತ ಮತ್ತು ಯಶಸ್ವಿ ರಾಜಕಾರಣಿಗಳು ಎನ್ನುವುದನ್ನು ಮರೆಯಬಾರದು.
ಗಾಂಧೀಜಿ ರಾಜಕೀಯ ಮಾಡಿರಲಿಲ್ಲವೇ? ಸ್ವಾತಂತ್ರ್ಯಹೋರಾಟ ಎನ್ನುವುದು ರಾಜಕೀಯ ಚಟುವಟಿಕೆಯಲ್ಲದೆ ಮತ್ತೇನು? ಆದರೆ ಅವರು ಚುನಾವಣಾ ರಾಜಕೀಯದಲ್ಲಿ ತೊಡಗಿಸಿಕೊಂಡಿರಲಿಲ್ಲ. ಬಯಸಿದ್ದರೆ ದೇಶದ ಪ್ರಧಾನಿಯಾಗಲು ಗಾಂಧೀಜಿಯವರಿಗೇನು  ಸಾಧ್ಯ ಇರಲಿಲ್ಲವೇ? ಗಾಂಧೀಜಿಯವರಿಗೆ ಚುನಾವಣಾ ರಾಜಕೀಯದ ಶಕ್ತಿ-ದೌರ್ಬಲ್ಯಗಳು ಮಾತ್ರವಲ್ಲ ಅದರ ಇತಿಮಿತಿಯೂ ತಿಳಿದಿತ್ತು. ಆದ್ದರಿಂದಲೇ ಅವರು ಅದರಿಂದ ದೂರ ಇದ್ದರು ಮತ್ತು ಜನರಿಗೆ ಹತ್ತಿರವಾಗಿದ್ದರು. ಅಣ್ಣಾ ಹಜಾರೆಯವರು ಮಾಡಬಹುದಾದ ರಾಜಕೀಯ ಇದು.
ಜಯಪ್ರಕಾಶ್ ನಾರಾಯಣ್ ಕೂಡಾ ಗಾಂಧೀಜಿ ಮಾದರಿಯ ರಾಜಕೀಯವನ್ನೇ ನಡೆಸಿದವರು. ಸ್ವತಂತ್ರಭಾರತದಲ್ಲಿ ಗಾಂಧೀಜಿಯವರ ನಿಜವಾದ ಉತ್ತರಾಧಿಕಾರಿಯಂತೆ ನಡೆದುಕೊಂಡವರು ಜೆಪಿ. ಗಾಂಧೀಜಿಯವರಿಗೆ ನೆಹರೂ ಬಗೆಗಿನ ದೌರ್ಬಲ್ಯ ಇಲ್ಲದೆ ಹೋಗಿದ್ದರೆ ರಾಮಮನೋಹರ ಲೋಹಿಯಾ ಇಲ್ಲವೇ ಜಯಪ್ರಕಾಶ್ ನಾರಾಯಣ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡುತ್ತಿದ್ದರೋ ಏನೋ? ಗಾಂಧೀಜಿಯವರಂತೆ ಜೆಪಿಯವರೂ ಮನಸ್ಸು ಮಾಡಿದ್ದರೆ ದೇಶದ ಪ್ರಧಾನಿಯಾಗಬಹುದಿತ್ತು. ಎರಡು ಬಾರಿ ಅಂತಹ ಅವಕಾಶ ಒದಗಿಬಂದಿತ್ತು.
ಮೊದಲನೆಯ ಬಾರಿ ಗಾಂಧೀಜಿಯವರೇ  ಈ ಆಹ್ಹಾನ ನೀಡಿದ್ದರು. ಇನ್ನೇನು ಸ್ವಾತಂತ್ರ್ಯ ಘೋಷಣೆಯಾಗಲಿದೆ ಎನ್ನುವಾಗ ಗಾಂಧಿ ಅನುಯಾಯಿಗಳೆಲ್ಲ ಸಂಪುಟ ಸೇರುವ ಹುರುಪಲಿದ್ದರು. ಆಗ ಗಾಂಧೀಜಿ ಜೆಪಿಯವರನ್ನು ಕರೆದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವಂತೆ ಸಲಹೆ ನೀಡಿದ್ದರು. ಇದಕ್ಕೆ ನೆಹರೂ ಮತ್ತು ಸಂಗಡಿಗರ ವಿರೋಧ ಇದ್ದರೂ ಜೆಪಿ ಒಪ್ಪಿಕೊಂಡಿದ್ದರೆ ದೇಶದ ಇತಿಹಾಸವೇ ಬೇರೆ ದಾರಿ ಹಿಡಿಯುತ್ತಿತ್ತು.  ನೆಹರೂ ನಂತರವಾದರೂ ಅವರು ಪ್ರಧಾನಿಯಾಗುತ್ತಿದ್ದರು.
ಆ ಅವಕಾಶ ಮತ್ತೆ 1964ರಲ್ಲಿ ಜೆಪಿ ಮನೆಬಾಗಿಲು ಬಡಿದಿತ್ತು. ಅಸ್ವಸ್ಥರಾಗಿದ್ದ ನೆಹರೂ ಅವರ ಅಂತ್ಯ ಸಮೀಪಿಸುತ್ತಿದೆ ಎಂದು ಅನಿಸಿದಾಗ ಕೇಂದ್ರ ಸಂಪುಟದಲ್ಲಿ ಹಿರಿಯಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಖುದ್ದಾಗಿ ಜೆಪಿಯವರನ್ನು ಭೇಟಿ ಮಾಡಿ ನೆಹರೂ ನಂತರ ಪ್ರಧಾನಿಯಾಗುವಂತೆ ಕೋರಿಕೊಂಡಿದ್ದರು. ಗಾಂಧೀಜಿ ಹತ್ಯೆಯಾದ ಎರಡೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದ ಜೆಪಿಯವರು ಶಾಸ್ತ್ರಿಯವರ ಆಹ್ಹಾನವನ್ನು ಒಪ್ಪಿಕೊಳ್ಳಲಿಲ್ಲ.
ಆಗಲೇ ಅವರು ಪಕ್ಷರಾಜಕೀಯವನ್ನು ತ್ಯಜಿಸಿ ವಿನೋಬಾ ಭಾವೆ ಅವರ ಭೂದಾನ ಚಳುವಳಿಯಲ್ಲಿ ಸಕ್ರಿಯರಾಗಿದ್ದರು. ಆದರೆ ಇಳಿವಯಸ್ಸಿನಲ್ಲಿ ತಮ್ಮ ಅನಾರೋಗ್ಯದ ಹೊರತಾಗಿಯೂ ಮತ್ತೆ ಅವರು ಹೋರಾಟದ ರಾಜಕೀಯಕ್ಕೆ ಧುಮುಕಿದರು. ಚುನಾವಣಾ ರಾಜಕಾರಣದಿಂದ ಕೊನೆಯವರೆಗೆ ಅವರು ದೂರವೇ ಉಳಿದರು.
ಅಣ್ಣಾ ಹಜಾರೆ ಅವರು ಇನ್ನೊಬ್ಬ ಗಾಂಧಿ ಆಗಬೇಕು, ಮತ್ತೊಬ್ಬ ಜೆಪಿ ಆಗಬೇಕು ಎಂದು ಆಶಿಸುವುದು ಸುಲಭ. ಆದರೆ ಈಗಿನ ರಾಜಕೀಯದಲ್ಲಿ ಭ್ರಷ್ಟರೇ ಬಹುಸಂಖ್ಯೆಯಲ್ಲಿರುವಾಗ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವುದು  ಅಷ್ಟು ಸುಲಭ ಅಲ್ಲ. ಅಂತಹದ್ದೊಂದು ದೊಡ್ಡ ರಾಜಕೀಯ ಚಳುವಳಿಗೆ ಹೆಗಲು ಕೊಡುವ ನಾಯಕರು ಮತ್ತು ಕಾರ್ಯಕರ್ತರು ಎಷ್ಟು ಮಂದಿ ನಮ್ಮ ನಡುವೆ ಇದ್ದಾರೆ? ರಾಜಕಾರಣಿಗಳೆಂದರೆ ಭ್ರಷ್ಟರು ಎಂದಾಗಿರುವ ಕಾರಣದಿಂದಾಗಿಯೇ ಅಣ್ಣಾ ಹಜಾರೆ ಚಳುವಳಿ ರಾಜಕಾರಣಿಗಳ ವಿರುದ್ಧವೇ ನಡೆಯುತ್ತಿದೆ ಎಂಬ ಆತಂಕ ಅಡ್ವಾಣಿಯವರಲ್ಲಿ ಹುಟ್ಟಿರುವುದು.
ಇದಕ್ಕೆ ಕಾರಣ ಎಲ್ಲ ಪಕ್ಷಗಳಲ್ಲಿ ಬಹುಸಂಖ್ಯೆಯಲ್ಲಿ ಭ್ರಷ್ಟರು ತುಂಬಿರುವುದು. ಜೆಪಿಯವರು ‘ಸಂಪೂರ್ಣಕ್ರಾಂತಿ’ ಚಳುವಳಿ ಪ್ರಾರಂಭಿಸಿದಾಗ ಅವರಿಗೆ ಈ ಸಮಸ್ಯೆ ಇರಲಿಲ್ಲ. ಆಗಿನ ವಿರೋಧಪಕ್ಷಗಳಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್ ಫರ್ನಾಂಡಿಸ್, ಮಧು ದಂಡವತೆ, ಮಧುಲಿಮಯೆ, ಮುಲಾಯಂಸಿಂಗ್‌ಯಾದವ್, ಲಾಲುಪ್ರಸಾದ್,ನಾನಾಜಿ ದೇಶಮುಖ್ ಮೊದಲಾದ ನಾಯಕರಿದ್ದರು. ಇವರ್ಯಾರೂ ಆಗ ಅಧಿಕಾರ ರಾಜಕಾರಣದ ಕೆಸರಿಗೆ ಕಾಲಿಟ್ಟಿರಲಿಲ್ಲ.  ಎಡಪಕ್ಷಗಳ ನಾಯಕರನ್ನು ಹೊರತುಪಡಿಸಿ ಉಳಿದ ಯಾವ ವಿರೋಧಪಕ್ಷಗಳಲ್ಲಿ ಅಣ್ಣಾಹಜಾರೆ ಪಕ್ಕದಲ್ಲಿ ಕೂರುವ ಯೋಗ್ಯತೆ ಇರುವ ಎಷ್ಟು ಮಂದಿ ನಾಯಕರು ಈಗ ಇದ್ದಾರೆ?
ನಾಯಕರನ್ನು ಪಕ್ಕಕ್ಕೆ ಇಟ್ಟುಬಿಡಿ, ಹೋರಾಟದ ಸಾಗರಕ್ಕೆ ಧುಮುಕಲು ಸಿದ್ದ ಇರುವ ಕಾರ್ಯಕರ್ತರು ಎಷ್ಟು ಮಂದಿ ಇದ್ದಾರೆ. ನಾಳೆ ಅಣ್ಣಾ ಹಜಾರೆ ದೇಶವ್ಯಾಪಿ ಚಳುವಳಿಗೆ ಕರೆಗೊಟ್ಟರೆ ಎಲ್ಲವನ್ನೂ ತ್ಯಾಗಮಾಡಿ ಅದರಲ್ಲಿ ಪಾಲ್ಗೊಳ್ಳಲು ಎಷ್ಟುಮಂದಿ ಕಾರ್ಯಕರ್ತರು ಮುಂದೆಬರಬಹುದು? ಜೆಪಿ ಚಳುವಳಿ ಪ್ರಾರಂಭವಾಗಿದ್ದೇ ವಿದ್ಯಾರ್ಥಿ ಚಳುವಳಿಯಿಂದ ಎಂಬುದನ್ನು ಮರೆಯಬಾರದು.
ಅಹ್ಮದಾಬಾದ್ ಮತ್ತು ಮೋರ್ವಿಯಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್‌ನ ಊಟ-ತಿಂಡಿಯ ದರ ಏರಿಕೆ ವಿರುದ್ಧ ಚಳುವಳಿ ಪ್ರಾರಂಭಿಸಿದಾಗ ಅಲ್ಲಿ ಜೆಪಿ ಇರಲಿಲ್ಲ. ಅದರಿಂದ ಪ್ರೇರಣೆ ಪಡೆದು ಬಿಹಾರದ ವಿದ್ಯಾರ್ಥಿಗಳು ಚಳುವಳಿ ಪ್ರಾರಂಭಿಸಿದ್ದರು. ಆಗಲೂ ಜೆಪಿ ಅದರಲ್ಲಿ ನೇರವಾಗಿ ಭಾಗಿಯಾಗಿರಲಿಲ್ಲ. ಕೊನೆಗೆ ವಿದ್ಯಾರ್ಥಿಗಳು ತಮ್ಮ ನಾಯಕತ್ವ ವಹಿಸಬೇಕೆಂದು ಕೇಳಿಕೊಂಡಾಗ ಜೆಪಿ ‘ನಿಮ್ಮಲ್ಲಿ ಎಷ್ಟುಮಂದಿ ಕನಿಷ್ಠ ಒಂದುವರ್ಷದ ಮಟ್ಟಿಗೆ ಶಾಲೆ-ಕಾಲೇಜು ತೊರೆದು ಚಳುವಳಿಯಲ್ಲಿ ಭಾಗವಹಿಸಲು ಸಿದ್ಧ ಇದ್ದೀರಿ?’ ಎಂದು ಕೇಳಿದ್ದರು.
ವಿದ್ಯಾರ್ಥಿಗಳು ಭರವಸೆ ನೀಡಿದ ನಂತರವೇ ಜೆಪಿ ಸಕ್ರಿಯವಾಗಿ ಚಳುವಳಿನಿರತ ವಿದ್ಯಾರ್ಥಿಗಳ ಜತೆ ಸೇರಿಕೊಂಡದ್ದು.
ಅಣ್ಣಾಹಜಾರೆ ಅವರು ಮೊನ್ನೆಯ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ದೆಹಲಿಯಲ್ಲಿ ಮಾತ್ರವಲ್ಲ ಬಹುತೇಕ ನಗರ-ಪಟ್ಟಣಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಜನರು ಬೀದಿಗಿಳಿದಿದ್ದರು. ಆದರೆ ಅವರಿಗೆ ಅಣ್ಣಾ ಹಜಾರೆ ಅವರು ಅಂದು ಜೆಪಿ ಕೇಳಿದ್ದ ಪ್ರಶ್ನೆಯನ್ನೇ ಕೇಳಿದರೆ ಎಷ್ಟು ಮಂದಿ ಒಪ್ಪಿಕೊಳ್ಳಲು ಸಿದ್ದ ಇರಬಹುದು?
ಇಮೇಲ್, ಎಸ್‌ಎಂಎಸ್, ಟ್ವಿಟರ್‌ಗಳ ಮೂಲಕ ಕ್ರಾಂತಿ ಮಾಡಲು ಹೊರಟವರಲ್ಲಿ ಎಷ್ಟುಮಂದಿ ಆರು ತಿಂಗಳು ಕೆಲಸಕ್ಕೆ ರಜೆಹಾಕಿ ಅಣ್ಣಾಹಜಾರೆ ಚಳುವಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು? ಫ್ರೀಡಮ್‌ಪಾರ್ಕ್‌ನಲ್ಲಿ ಘೋಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳು ಆಗಲೇ ಸಿಇಟಿ ಪರೀಕ್ಷೆಯ ತಲೆಬಿಸಿಯಲ್ಲಿದ್ದಾರೆ. ಇಮೇಲ್,ಎಸ್‌ಎಂಎಸ್, ಟ್ವಿಟರ್‌ಗಳು ಆಗಲೇ ನಿಂತುಬಿಟ್ಟಿವೆ. ಜೆಪಿ ಚಳುವಳಿಗೆ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರ ಬಲ ತಂದುಕೊಟಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿಯಾದರೂ ಪ್ರಾಮಾಣಿಕರು ಉಳಿದುಕೊಂಡಿದ್ದಾರೆಯೇ? ಉಳಿದುಕೊಂಡಿದ್ದರೆ ಕನಿಷ್ಠ ಕರ್ನಾಟಕದಲ್ಲಿಯಾದರೂ ಅವರು ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬೀದಿಗಿಳಿಯಬೇಕಿತ್ತಲ್ಲಾ? ಇದು ಇಂದಿನ ವಾಸ್ತವ.
ಪ್ರಾಮಾಣಿಕತೆಯೊಂದರಿಂದಲೇ ರಾಜಕೀಯದಲ್ಲಿ ಎಲ್ಲವನ್ನೂ ಸಾಧಿಸಲು ಆಗುವುದಿಲ್ಲ. ಅದು ಸಾಧ್ಯವಾಗುವುದಿದ್ದರೆ ಪ್ರಧಾನಿಯಾಗಿ ಮನಮೋಹನ್‌ಸಿಂಗ್ ಯಶಸ್ವಿಯಾಗಬೇಕಿತ್ತು. ಅಣ್ಣಾಹಜಾರೆ ಅವರು ಎಲ್ಲಾ ಬಗೆಯ ರಾಜಕೀಯದಿಂದ ದೂರ ಇದ್ದು ಪ್ರಾಮಾಣಿಕತೆಯನ್ನು ಉಳಿಸಿಕೊಂಡವರು. ಆದರೆ ಮನಮೋಹನ್‌ಸಿಂಗ್ ಅಧಿಕಾರ ಕೇಂದ್ರಿತ ರಾಜಕೀಯದಲ್ಲಿ ತೊಡಗಿಸಿಕೊಂಡೂ ವೈಯಕ್ತಿಕ ಮಟ್ಟದಲ್ಲಿ ಪ್ರಾಮಾಣಿಕತೆಯನ್ನು ಉಳಿಸಿಕೊಂಡವರು. ಇದೇನು ಕಡಿಮೆ ಸಾಧನೆಯಲ್ಲ. ಹೀಗಿದ್ದರೂ ಪ್ರಾಮಾಣಿಕ ಮನಮೋಹನ್‌ಸಿಂಗ್ ಅವರಿಗೆ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡಲು ಆಗಲಿಲ್ಲ. ಆದ್ದರಿಂದ ಕೇವಲ ಅಣ್ಣಾ ಹಜಾರೆ ಮತ್ತು ಅವರ ಬೆರಳೆಣಿಕೆಯ ಬೆಂಬಲಿಗರಿಂದ ಭ್ರಷ್ಟಾಚಾರದ ಮೂಲೋತ್ಪಾಟನೆಯಾಗಲಿ, ರಾಜಕೀಯ ಬದಲಾವಣೆಯಾಗಲಿ ಸಾಧ್ಯವಾಗಲಾರದು.
ಇದು ಸಾಧ್ಯವಾಗಬೇಕಾದರೆ  ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಉಳಿದುಕೊಂಡಿರುವ ಸಜ್ಜನರು ತಮ್ಮ ಪಕ್ಷಗಳನ್ನು ತೊರೆದು ಹೊರಬಂದು ಅಣ್ಣಾಹಜಾರೆ ಮಾರ್ಗದರ್ಶನದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟಲು ಕೈಜೋಡಿಸಬೇಕಾಗುತ್ತದೆ. ಇದು ಹೇಗೆ ಎನ್ನುವುದಕ್ಕೆ 1977 ಮತ್ತು 1989ರ ರಾಜಕೀಯ ಬದಲಾವಣೆಯ ಮಾದರಿಗಳು ನಮ್ಮ ಮುಂದಿವೆ.ಆಗ ಆಡಳಿತ ಪಕ್ಷ ಮಾತ್ರ ಭ್ರಷ್ಟವಾಗಿತ್ತು, ಈಗ ವಿರೋಧಪಕ್ಷಗಳೂ ಭ್ರಷ್ಟಗೊಂಡಿರುವುದರಿಂದ ಅಲ್ಲಿಯೂ ಒಡೆಯುವ ಕೆಲಸ ನಡೆಯಬೇಕಾಗುತ್ತದೆ. ಮೊದಲು ಅಣ್ಣಾ ಹಜಾರೆ ಚಳುವಳಿಯನ್ನು ಬೆಂಬಲಿಸುತ್ತಿರುವ ಪ್ರಮುಖ ವಿರೋಧಪಕ್ಷವಾದ ಬಿಜೆಪಿಯಿಂದಲೇ ಇದು ಪ್ರಾರಂಭವಾಗಲಿ.

Monday, April 11, 2011

ರಾಜಕೀಯದಿಂದ ದೂರ ಇದ್ದಷ್ಟು ದಿನ ಇವರು ನಮ್ಮಣ್ಣ

ಕತ್ತಲೆಯ ಹಾದಿಯಲ್ಲಿ ಕನಸುಗಳ ದೀಪ ಹಿಡಿದುಕೊಂಡು ಹೊರಟವರಿಗೆ ಎದುರಾಗುವ ಪ್ರತಿಯೊಂದು ನೆರಳುಗಳಲ್ಲಿಯೂ ತಮ್ಮನ್ನು ಮುನ್ನಡೆಸುವ ಅವತಾರಪುರುಷ ಕಾಣುವುದು ಸಹಜ. ಭ್ರಷ್ಟ ವ್ಯವಸ್ಥೆಯಿಂದಾಗಿ ರೋಸಿಹೋಗಿ ಹತಾಶೆಗೀಡಾದ ಜನತೆಯ ಕಣ್ಣುಗಳಿಗೆ ಸರ್ಕಾರದ ವಿರುದ್ಧ ಸಣ್ಣಗೆ ಸಿಟ್ಟುಮಾಡಿಕೊಂಡ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಲ್ಲಿ ಒಬ್ಬ ಜಯಪ್ರಕಾಶ್ ನಾರಾಯಣ್ ಕಾಣುತ್ತಾರೆ, ಕಪ್ಪು ಹಣದ ವಿರುದ್ಧ ಮಾತನಾಡುವ ಒಬ್ಬ ಸಾಮಾನ್ಯ ಯೋಗಗುರು ಬಾಬಾ ರಾಮ್‌ದೇವ್ ಅವರಲ್ಲಿ ಒಬ್ಬ ವಿನೋಬಾ ಭಾವೆ ಕಾಣುತ್ತಾರೆ, ಒಬ್ಬ  ಸಾಮಾಜಿಕ ಸೇವಾ ಕಾರ್ಯಕರ್ತ ಅಣ್ಣಾ ಹಜಾರೆ ಅವರಲ್ಲಿ ಮಹಾತ್ಮ ಗಾಂಧೀಜಿ ಕಾಣುತ್ತಾರೆ.
ಆದರೆ ಒಬ್ಬ ಮಹಾತ್ಮ, ಒಬ್ಬ ಜೆಪಿ ಇಲ್ಲವೇ ಒಬ್ಬ ವಿನೋಬಾ ಭಾವೆ ರಾತ್ರಿ ಹಗಲಾಗುವುದರೊಳಗೆ ಸುದ್ದಿಮಾಧ್ಯಮಗಳ ಮಿಂಚುಬೆಳಕಲ್ಲಿ ಉದಿಸಿದ ತಾರೆಗಳಲ್ಲ. ಇದನ್ನು ಅರ್ಥಮಾಡಿಕೊಳ್ಳದಿದ್ದರೆ ಆ ಮಹನೀಯರ ಹೋರಾಟದ ಬದುಕನ್ನು ಅಗೌರವಿಸಿದಂತಾಗುವುದು ಮಾತ್ರವಲ್ಲ, ಭ್ರಷ್ಟಚಾರದ ವಿರುದ್ದ ದೇಶದಾದ್ಯಂತ ಹುಟ್ಟಿಕೊಂಡಿರುವ ಜನಾಭಿಪ್ರಾಯ ತಾರ್ಕಿಕ ಅಂತ್ಯ ಕಾಣದೆ ವ್ಯರ್ಥಗೊಂಡು ಮತ್ತೊಂದು ಭ್ರಮನಿರಸನಕ್ಕೆ ದಾರಿಮಾಡಿಕೊಡುವ ಅಪಾಯವೂ ಇದೆ.
ಸರ್ಕಾರ ಮಣಿಯಲು ಕಾರಣವಾದ ‘ಕ್ರಾಂತಿಯ ಹರಿಕಾರರು’ ತಾವೇ ಎಂದು  ಮಾಧ್ಯಮಗಳು ಆಗಲೇ ತಮ್ಮ ಬೆನ್ನು ತಟ್ಟಿಕೊಳ್ಳುತ್ತಿವೆ. ಅಣ್ಣಾ ಹಜಾರೆ ಅವರ ಸತ್ಯಾಗ್ರಹದ ಯಶಸ್ಸಿನಲ್ಲಿ ಅತೀ ಎನಿಸುವಷ್ಟು ಕ್ರಿಯಾಶೀಲವಾಗಿದ್ದ ಮಾಧ್ಯಮಗಳ, ಅದರಲ್ಲೂ ಹುಟ್ಟು-ಸಾವುಗಳೆರಡನ್ನೂ ಹಬ್ಬದಂತೆ ಆಚರಿಸುವ ಟಿವಿ ಚಾನೆಲ್‌ಗಳ ಪಾತ್ರವನ್ನು ಅಲ್ಲಗಳೆಯುವಂತಿಲ್ಲ. ಆದರೆ ಅದೇ ಟಿವಿ ಚಾನೆಲ್‌ಗಳು ಆಗಲೇ ಭಿನ್ನ ರಾಗ ಹಾಡುತ್ತಿರುವ ಬಾಬಾ ರಾಮ್‌ದೇವ್ ಅವರ ಸುತ್ತ ನೆರೆದಿವೆ. ಮಾಧ್ಯಮಗಳ ಮೇಲಿನ ಅತಿ ಅವಲಂಬನೆಯ ಅಪಾಯ ಇದು.
ಒಂದು ಮಸೂದೆಯ ರಚನೆಯ ಸಮಿತಿಯಲ್ಲಿ ನಾಗರಿಕ ಸಮಾಜದ ಐವರು ಪ್ರತಿನಿಧಿಗಳು ಪಾಲ್ಗೊಳ್ಳಲು ಸರ್ಕಾರ ಒಪ್ಪಿಕೊಂಡದ್ದನ್ನೇ ದೊಡ್ಡ ಗೆಲುವೆಂದು ತಿಳಿದುಕೊಳ್ಳಬೇಕಾಗಿಲ್ಲ. ಈಗಿನ ಭ್ರಷ್ಟ ರಾಜಕೀಯ ವ್ಯವಸ್ಥೆಯ ಆಳ-ಅಗಲಗಳ ಪರಿಚಯ ಇರುವ ಯಾರೂ ಅಷ್ಟೊಂದು ಆಶಾವಾದಿಯಾಗುವುದು ಸಾಧ್ಯ ಇಲ್ಲ. ಕರ್ನಾಟಕಕ್ಕಿಂತ ಬೇರೆ ಉದಾಹರಣೆ ಯಾಕೆ ಬೇಕು? ರಾಜ್ಯದ ಮುಖ್ಯಮಂತ್ರಿ ಮತ್ತು ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಲೋಕಾಯುಕ್ತರು ಮಾಡಬೇಕಾಗಿದ್ದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ಕೊಟ್ಟು ಕೈ ಕಟ್ಟಿಹಾಕಿಲ್ಲವೇ? ಇಲ್ಲಿ ಹೈಕೋರ್ಟ್ ಇದ್ದರೆ ಅಲ್ಲಿ ಸುಪ್ರೀಂಕೋರ್ಟ್ ಇದೆ. ನ್ಯಾಯಾಲಯಗಳು ಕೂಡಾ ಇಂದು ಸಂಶಯಾತೀತವಾಗಿ ಉಳಿದಿಲ್ಲ. ಆದ್ದರಿಂದ ಲೋಕಪಾಲರ ನೇಮಕದಿಂದಲೇ ಭ್ರಷ್ಟಾಚಾರ ನಿರ್ಮೂಲನೆಗೊಳ್ಳಲಿದೆ ಎಂದು ಯಾರೂ ತಿಳಿದುಕೊಳ್ಳಬೇಕಾಗಿಲ್ಲ. ಹಾಗೆ ನೋಡಿದರೆ ಲೋಕಪಾಲರ ನೇಮಕಕ್ಕಿಂತಲೂ ಮೊದಲು ಈಗಿನ ಭ್ರಷ್ಟರಾಜಕೀಯ ವ್ಯವಸ್ಥೆಯ ಹುಟ್ಟಿಗೆ ಕಾರಣವಾಗಿರುವ ಚುನಾವಣಾ ವ್ಯವಸ್ಥೆಯ ಸುಧಾರಣೆಯಾಗಬೇಕಿತ್ತು. ಪ್ರತಿಯೊಂದು ಕಾನೂನನ್ನೂ ನಾಗರಿಕ ಸಮಾಜವೇ ರಚಿಸುವ ಇಲ್ಲವೇ ತಿದ್ದುವ ಕೆಲಸವನ್ನು ಮಾಡುವುದು ಸಾಧ್ಯ ಇಲ್ಲವಲ್ಲಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಕೆಲಸವನ್ನು ಮಾಡಬೇಕಾಗಿರುವುದು ಶಾಸನ ರಚನೆಯ ಜವಾಬ್ದಾರಿ ಹೊಂದಿರುವ ಜನಪ್ರತಿನಿಧಿಗಳಲ್ಲವೇ? ಆದ್ದರಿಂದ ಶಾಸನಸಭೆಗೆ ಪ್ರಾಮಾಣಿಕರು, ಸಚ್ಚಾರಿತ್ರ್ಯಉಳ್ಳವರು ಮತ್ತು ಪ್ರಜ್ಞಾವಂತರು ಆರಿಸಿಬರುವಂತಹ ಚುನಾವಣಾ ವ್ಯವಸ್ಥೆ ಇಲ್ಲದೆ ಹೋದರೆ ಪ್ರತಿಬಾರಿ ಜನಪರವಾದ ಕಾನೂನು ರಚನೆಗೆ ಅಣ್ಣಾ ಹಜಾರೆ ಅವರು ಉಪವಾಸ ಕೂರಬೇಕಾಗುತ್ತದೆ.
ಅಂದ ಮಾತ್ರಕ್ಕೆ ಸಿನಿಕರಾಗುವ ಅಗತ್ಯ ಖಂಡಿತ ಇಲ್ಲ. ಬೇರೇನೂ ಆಗಬೇಕಾಗಿಲ್ಲ, ಸಿವಿಲ್ ಸೊಸೈಟಿ ರಚಿಸಿರುವ ‘ಜನಲೋಕಪಾಲ ಮಸೂದೆ’ ಅದರ ಮೂಲರೂಪದಲ್ಲಿಯೇ ಕಾಯಿದೆಯಾಗಿ ಅನುಷ್ಠಾನಕ್ಕೆ ಬಂದರಷ್ಟೇ ಸಾಕು. ದೇಶದ ಈಗಿನ ಜನಾಂಗ ಮಾತ್ರವಲ್ಲ ಭವಿಷ್ಯದ ಜನಾಂಗ ಕೂಡಾ ಹಜಾರೆ ಅವರಿಗೆ ಚಿರಋಣಿಯಾಗಿರುತ್ತದೆ. ಆದರೆ  ಈ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಹೊಂದಿದ್ದರೆ ಮುಂದಿನ ದಾರಿ ತುಳಿಯುವಾಗ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕಾಗುತ್ತದೆ. ಸಾಮಾನ್ಯವಾಗಿ ಹೋರಾಟಗಾರರೆಲ್ಲರೂ ಶತ್ರುಗಳನ್ನು ಸರಿಯಾಗಿಯೇ ಗುರುತಿಸಿಕೊಂಡಿರುತ್ತಾರೆ, ಆದರೆ ಯಾವಾಗಲೂ ಹೋರಾಟ ಎಡವಿ ಬೀಳುವುದು ಅದರ ನಾಯಕರು ಆರಿಸಿಕೊಳ್ಳುವ ಮಿತ್ರರ ಆಯ್ಕೆಯಲ್ಲಿ. ಅಣ್ಣಾ ಹಜಾರೆ ಮತ್ತು ಅವರ ಸಂಗಾತಿಗಳು ಎಚ್ಚರ ವಹಿಸಬೇಕಾಗಿರುವುದು ಮಿತ್ರರ ಬಗ್ಗೆ, ಶತ್ರುಗಳ ಬಗ್ಗೆ ಅಲ್ಲ.
ಆಮರಣ ಉಪವಾಸ ಕೊನೆಗೊಳಿಸುವ ಮುನ್ನ ಅಣ್ಣಾ ಹಜಾರೆ ಅವರು ಅಲ್ಲಿ ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ದೃಶ್ಯಗಳನ್ನು ಟಿವಿ ಚಾನೆಲ್‌ಗಳು ನೇರ ಪ್ರಸಾರ ಮಾಡುತ್ತಿದ್ದವು. ಆ ಹೊತ್ತಿನಲ್ಲಿ ವೇದಿಕೆಯಲ್ಲಿದ್ದ ವ್ಯಕ್ತಿಯೊಬ್ಬ ಕಾಗದದ ಪೊಟ್ಟಣವೊಂದನ್ನು ಬಿಚ್ಚಿ ದೊಡ್ಡ ಕತ್ತಿಯೊಂದನ್ನು ಹೊರತೆಗೆದು ಅಣ್ಣಾ ಅವರ ಕೈಗೆ ಕೊಡಲು ಹೊರಟಿದ್ದ. ಪಕ್ಕದಲ್ಲಿದ್ದ ಸ್ವಾಮಿ ಅಗ್ನಿವೇಶ್ ತಕ್ಷಣ ಜಾಗೃತರಾಗಿ ಕತ್ತಿ ಕೊಡಲು ಬಂದವನನ್ನು ಹಿಂದಕ್ಕೆ ಸರಿಸಿದರು. ಇಲ್ಲದೆ ಹೋಗಿದ್ದರೆ ನಾವೆಲ್ಲ ಕಾಣಬಯಸುವ ‘ಮಹಾತ್ಮಗಾಂಧಿ’ ಅವರು ಕೈಯಲ್ಲಿ ಕತ್ತಿ ಹಿಡಿದ ‘ರೋಮಾಂಚಕಾರಿ’ ಕ್ಷಣಗಳನ್ನು ಟಿವಿ ಚಾನೆಲ್‌ಗಳು ನೇರಪ್ರಸಾರ ಮಾಡಿಬಿಡುತ್ತಿದ್ದವು. ಮರುದಿನದ ಪತ್ರಿಕೆಗಳಲ್ಲಿ ಅದೇ ಚಿತ್ರ ಪ್ರಕಟವಾಗುತ್ತಿತ್ತೋ ಏನೋ? ಕಣ್ಣರೆಪ್ಪೆ ಮುಚ್ಚಿ ತೆರೆದುಕೊಳ್ಳುವಷ್ಟರಲ್ಲಿ ನಡೆದುಹೋದ ಈ ಸಣ್ಣ ಘಟನೆ ಅಣ್ಣಾ ಹಜಾರೆ ಹೋರಾಟದ ಶಕ್ತಿ-ದೌರ್ಬಲ್ಯಗಳೆರಡನ್ನೂ ಹೇಳುವಂತಿತ್ತು.
ಕತ್ತಿ ಮತ್ತು ಉಪವಾಸದ ಸಂಕೇತಗಳು ಬೇರೆ. ಅವುಗಳು ಬಿಂಬಿಸುವ ವಿಚಾರಧಾರೆಗಳು ಕೂಡಾ ಬೇರೆಬೇರೆ. ಅಣ್ಣಾ ಅವರ ಪಕ್ಕದಲ್ಲಿ ಮಾವೋವಾದಿಗಳಿಗೂ ಅಹಿಂಸೆಯ ಪಾಠ ಬೋಧಿಸುತ್ತಿರುವ ಸ್ವಾಮಿ ಅಗ್ನಿವೇಶ್ ಅಂತಹವರು ಮಾತ್ರವಲ್ಲ ಬಂದೂಕಿನ ನಳಿಕೆಯ ಮೂಲಕ ಬದಲಾವಣೆಯನ್ನು ತರಬಯಸುವ ಕಾಡಲ್ಲಿರುವ ಮಾವೋವಾದಿಗಳಿಗೂ, ಅದನ್ನೇ ಉಪವಾಸದ ಮೂಲಕ ಮಾಡಲು ಹೊರಟಿರುವ ಅಣ್ಣಾ ಹಜಾರೆ ಎಂಬ ಗಾಂಧಿವಾದಿಗೂ ಇರುವ ವ್ಯತ್ಯಾಸವನ್ನೇ ಅರಿಯದ ಕುರುಡುಕಣ್ಣುಗಳ ಕತ್ತಿವೀರರೂ ಇದ್ದಾರೆ. ಸ್ವಾಮಿ ಅಗ್ನಿವೇಶ್, ಶಾಂತಿಭೂಷಣ್, ಪ್ರಶಾಂತ್ ಭೂಷಣ್, ಅರವಿಂದ ಕೇರ್ಜಿವಾಲಾ, ಕಿರಣ್‌ಬೇಡಿ ಮೊದಲಾದವರ ಜತೆಯಲ್ಲಿ ಬಾಲಿವುಡ್ ತಾರೆಯರು, ಆಧ್ಯಾತ್ಮವನ್ನೇ ವ್ಯಾಪಾರ ಕೊಂಡಿರುವ ‘ದೇವಮಾನವ’ರು, ಅಧಿಕಾರ ಕಳೆದುಕೊಂಡಿರುವ ಭಗ್ನಹೃದಯಿ ರಾಜಕಾರಣಿಗಳು ಕೂಡಾ ಇದ್ದಾರೆ.
ಇವರೆಲ್ಲರ ನಡುವೆ ಅಣ್ಣಾ ಹಜಾರೆ ಅವರ ಜತೆಯಲ್ಲಿಯೇ ಆಮರಣ ಉಪವಾಸ ಕೂತ ವ್ಯಕ್ತಿಗಳ ಹೆಸರಾದರೂ ಯಾರಿಗಾದರೂ ಗೊತ್ತಿದೆಯೇ? ಯಾವ ಪತ್ರಿಕೆಗಳಲ್ಲಿಯಾದರೂ ಅವರ ಹೆಸರು ಪ್ರಕಟಗೊಂಡಿದೆಯೇ? ಯಾವುದಾದರೂ ಟಿವಿ ಚಾನೆಲ್ ಅವರ ಹೆಸರು ಹೇಳಿದೆಯೇ? ತಾನು ಉಪವಾಸ ಅಂತ್ಯಗೊಳಿಸುವ ಮೊದಲು ಅಣ್ಣಾ ಅವರು ಉಪವಾಸ ಕೂತಿದ್ದವರನ್ನು ಎಬ್ಬಿಸಿ ಅವರ ಗಲ್ಲ ಎತ್ತಿ ಹಣ್ಣಿನ ರಸ ಕುಡಿಸುತ್ತಿದ್ದಾಗಷ್ಟೇ ಆ ಅನಾಮಿಕ ಸತ್ಯಾಗ್ರಹಿಗಳ ಮುಖದರ್ಶನವಾಗಿದ್ದು. ಆಗಲೂ ಅವರ ಹೆಸರುಗಳನ್ನು ಯಾರೂ ಹೇಳಲಿಲ್ಲ.  ಆದರೆ ಮುಂಬೈನಲ್ಲಿ ವಿಮಾನದಲ್ಲಿ ಹಾರಿಬಂದು, ದೆಹಲಿಯ ಪಂಚತಾರಾ ಹೋಟೆಲ್‌ಗಳಲ್ಲಿ ತಿಂಡಿ-ತೀರ್ಥ ಸೇವಿಸಿ ಪಿಆರ್‌ಗಳ ಮೂಲಕ ಮಾಧ್ಯಮಮಿತ್ರರಿಗೆ ತಮ್ಮ ಆಗಮನದ ವಿಷಯವನ್ನು ಮುಂಚಿತವಾಗಿಯೇ ತಿಳಿಸಿ ಅಣ್ಣಾಹಜಾರೆಯವರ ಜತೆಯಲ್ಲಿ ಒಂದಷ್ಟು ಹೊತ್ತು ಕಾಣಿಸಿಕೊಂಡು ಮಿಂಚಿದ ಬಾಲಿವುಡ್ ತಾರೆಯರ ಹೆಸರುಗಳೆಲ್ಲ ಟಿವಿ ನೋಡುವ, ಪತ್ರಿಕೆ ಓದುವ ಜನರಿಗೆಲ್ಲ ಬಾಯಿಪಾಠವಾಗಿದೆ.
ಭ್ರಷ್ಟಾಚಾರದ ವಿರುದ್ಧದ ಹೋರಾಟ ಟಿವಿ ಕ್ಯಾಮೆರಾಗಳು ಕಣ್ಣಿಟ್ಟಿರುವ ವೇದಿಕೆಗಳಿಂದ ಪ್ರಾರಂಭವಾಗುವುದಲ್ಲ, ಅದು ಪ್ರತಿಯೊಬ್ಬರ ಮನೆ ಮತ್ತು ಮನಸ್ಸಿನೊಳಗಿಂದ ಪ್ರಾರಂಭವಾಗಬೇಕು.  ಎದೆ-ತೋಳುಗಳ ಮೇಲೆ ಅಣ್ಣಾಹಜಾರೆ ಹೆಸರು ಬರೆಸುವುದರಿಂದ, ಒಂದೆರಡು ಗಂಟೆ ಧರಣಿ ಕೂತು ಟಿವಿ ಚಾನೆಲ್‌ಗಳಲ್ಲಿ ಕಾಣಿಸಿಕೊಳ್ಳುವುದರಿಂದ, ಇಲ್ಲವೇ ಬೀದಿಗಳಲ್ಲಿ ಕ್ಯಾಂಡಲ್‌ಗಳನ್ನು ಹಚ್ಚುವುದರಿಂದ ಭ್ರಷ್ಟಾಚಾರವನ್ನು ಹೊಡೆದೋಡಿಸುವುದು ಸಾಧ್ಯ ಇಲ್ಲ. ಈ ಚಿತ್ರತಾರೆಯರು ಸರ್ಕಾರಕ್ಕೆ ವಂಚನೆ ಮಾಡದೆ ಗಳಿಸಿದ ಹಣಕ್ಕೆ ಸರಿಯಾಗಿ ವರಮಾನ ತೆರಿಗೆ ಕೊಟ್ಟರೆ ಸಾಕು.
ಅಣ್ಣಾ ಹಜಾರೆ ಅವರಿಗೆ ಅದಕ್ಕಿಂತ ದೊಡ್ಡ ಬೆಂಬಲ ಬೇಕಿಲ್ಲ. ಸಾಧ್ಯವಾದರೆ ಒಂದಷ್ಟು ಒಳ್ಳೆಯ ಅಭಿರುಚಿಯ ಚಿತ್ರಗಳನ್ನು ಸಮಾಜಕ್ಕೆ ನೀಡಲಿ. ಈ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ ಎಂದು ಎದೆಮೇಲೆ ಕೈಯಿಟ್ಟು ಹೇಳುವ ಎಷ್ಟು ಮಂದಿ ಚಿತ್ರರಂಗದಲ್ಲಿದ್ದಾರೆ? ಲಂಚ ಸ್ವೀಕರಿಸುವುದಿಲ್ಲ ಮಾತ್ರವಲ್ಲ ಕೊಡುವುದೂ ಇಲ್ಲ,  ತೆರಿಗೆ ಕಟ್ಟದೆ ಸರ್ಕಾರಕ್ಕೆ ವಂಚನೆ ಮಾಡುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಗೊತ್ತಿದ್ದೂ ಕಾನೂನಿನ ಉಲ್ಲಂಘನೆ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದವರು ಮಾತ್ರ ವೇದಿಕೆ ಹತ್ತಿ ಎಂದು  ಹಜಾರೆ ಹೇಳಿದ್ದರೆ ಅವರು ಉಪವಾಸ ಕೂತಿದ್ದ ವೇದಿಕೆ ಮುಕ್ಕಾಲು ಪಾಲು ಖಾಲಿಯಾಗಿರುತ್ತಿತ್ತು.
ಎರಡನೆಯ ದೊಡ್ಡ ಅಪಾಯ ಇರುವುದು ಇಂತಹ ಹೋರಾಟಗಾರರನ್ನೆಲ್ಲ ಸುಲಭದಲ್ಲಿ ಸಮ್ಹೋಹನಕ್ಕೊಳಪಡಿಸುವ ರಾಜಕೀಯ ಮಾಯಾಂಗನೆಯಿಂದ. ಎಂಬತ್ತರ ದಶಕದ ಆದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದಾಗೆಲ್ಲ ಬೆಂಗಳೂರಿನ ಜನಜೀವನ ಸ್ಥಗಿತಗೊಳ್ಳುತ್ತಿತ್ತು. ಅಧಿಕಾರದಲ್ಲಿದ್ದವರು ಕೈಕಾಲು ಕಂಪಿಸುತ್ತಿದ್ದವು. ಮುಂದೆ ರೈತರದ್ದೇ ಸರ್ಕಾರ ಎಂದು ಭ್ರಮಿಸಿಕೊಂಡವರು ಆ ಕಾಲದಲ್ಲಿ ಬಹಳ ಮಂದಿ ಇದ್ದರು. ಇನ್ನೊಂದೆಡೆ ಅಲ್ಲಿಯ ವರೆಗೆ ಕೇವಲ ಮುಖರಹಿತ ಮತಬ್ಯಾಂಕ್ ಆಗಿದ್ದ ದಲಿತರು ಸಂಘಟಿತರಾಗಿ ನಡೆಸುತ್ತಿದ್ದ ಚಳವಳಿಯಿಂದ ರಾಜಕೀಯ ಪಕ್ಷಗಳು ತಮ್ಮ ನೆಲೆ ಕಳೆದುಕೊಂಡವರಂತೆ ಭೀತಿಗೊಳಗಾಗಿದ್ದವು. ಆದರೇನಾಯಿತು? ಈ ಎರಡೂ ಚಳವಳಿಗಳ ನಾಯಕರು ರಾಜಕೀಯದ ಮೋಹಪಾಶಕ್ಕೆ ಸಿಕ್ಕಿ ತಾವು ನೆಲೆಕಲೆದುಕೊಂಡಿದ್ದು ಮಾತ್ರವಲ್ಲ ಚಳವಳಿಗಳು ಕೂಡಾ ದಿಕ್ಕು ತಪ್ಪಲು ಕಾರಣರಾದರು. ಈ ಅಪಾಯವನ್ನು ಅಣ್ಣಾ ಹಜಾರೆ ಮತ್ತು ಸಂಗಡಿಗರು ಕೂಡಾ ಮುಂದಿನ ದಿನಗಳಲ್ಲಿ ಎದುರಿಸುವ ಸಾಧ್ಯತೆ ಇದೆ.
ಆಗಲೇ ‘ನೀವು ಪ್ರಧಾನಮಂತ್ರಿಯಾಗಬೇಕೆಂದು ಜನ ಬಯಸಿದರೆ ಏನು ಮಾಡುತ್ತೀರಿ?’ ಎಂಬ ಪ್ರಶ್ನೆಯನ್ನು ಪತ್ರಕರ್ತರು ಅಣ್ಣಾ ಹಜಾರೆ ಅವರನ್ನು ಪೆದ್ದುಪೆದ್ದಾಗಿ ಕೇಳತೊಡಗಿದ್ದಾರೆ. ಈ ರೀತಿಯ ಜನಬೆಂಬಲ ಕಂಡಾಗ ಎಂತಹ ಗಟ್ಟಿಮನಸ್ಸಿನ ನಾಯಕರ ಸಂಯಮವೂ ಕರಗುವುದು ಸಹಜ. ಅಣ್ಣಾ ಹಜಾರೆ ಅವರಲ್ಲಿ ಅಲ್ಲದಿದ್ದರೂ ಅವರ ಬೆಂಬಲಿಗರಲ್ಲಿ ರಾಜಕೀಯ ಆಕಾಂಕ್ಷೆ ಹುಟ್ಟಿಕೊಳ್ಳುವ ಸಾಧ್ಯತೆಯೂ ಇದೆ. ಬಾಬಾ ರಾಮ್‌ದೇವ್ ಅವರ ಭಿನ್ನಮತದ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಅವರಿಂದಾಗಿ ತನ್ನ ರಾಜಕೀಯ ಆಕಾಂಕ್ಷೆ ಭಗ್ನಗೊಳ್ಳಬಹುದೆಂಬ ಭೀತಿಯಿಂದ ಹುಟ್ಟಿಕೊಂಡ ಹತಾಶೆಯೂ ಇರುವಂತೆ ಕಾಣುತ್ತಿದೆ.
ಆದ್ದರಿಂದ ಎಲ್ಲಿಯ ವರೆಗೆ ಅಣ್ಣಾಹಜಾರೆ ಮತ್ತು ಸಂಗಡಿಗರು ಅಧಿಕಾರ ರಾಜಕಾರಣದ ಮೋಹಪಾಶಕ್ಕೆ ಕೊರಳೊಡ್ಡದೆ ಹೋರಾಟ ಮುಂದುವರಿಸಿಕೊಂಡು ಹೋಗುತ್ತಾರೋ ಅಲ್ಲಿಯ ವರೆಗೆ ಜನ ಬೆಂಬಲ ಅವರ ಹಿಂದೆ ಇರಬಹುದು. ನೇರವಾಗಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಇಲ್ಲವೇ  ಸಾಂಕೇತಿಕ ಸ್ಪರ್ಧೆ, ಹೊರಗಿನ ಬೆಂಬಲ, ಸಜ್ಜನರ ಪರ ಪ್ರಚಾರ ಮೊದಲಾದ ಪರೋಕ್ಷ ಕ್ರಮಗಳ ಮೂಲಕ ಅವಸರದ ರಾಜಕೀಯ ಪ್ರವೇಶದ ದೌರ್ಬಲ್ಯಕ್ಕೆ ಬಲಿಯಾದರೆ ಮತ್ತೊಂದು ಸುತ್ತಿನ ಭ್ರಮನಿರಸನಕ್ಕೆ ಜನತೆ ಸಿದ್ದವಾಗಬೇಕು. ಯಾಕೆಂದರೆ ಪರ್ಯಾಯ ರಾಜಕೀಯ ಸಂಘಟನೆಗೆ ಬೇಕಾದ ತಯಾರಿಯಾಗಲಿ, ಶಕ್ತಿಯಾಗಲಿ ಈ ಹೋರಾಟಗಾರರಲ್ಲಿ ಇದ್ದಂತಿಲ್ಲ. ರಾಜಕೀಯ ಪಕ್ಷಗಳು ಕೂಡಾ  ಮೈಯೆಲ್ಲ ಕಣ್ಣಾಗಿ ಈ ಒಂದು ತಪ್ಪು ಹೆಜ್ಜೆಗಾಗಿ ಕಾಯುತ್ತಾ ಕೂತ ಹಾಗೆ ಕಾಣುತ್ತಿದೆ.

Monday, April 4, 2011

ಇಂದಿರಾಗಾಂಧಿ, ವಾಜಪೇಯಿ ಅವರಿಂದ ಕಲಿಯಿರಿ

ಇಷ್ಟೊಂದು ದೇಶಪ್ರೇಮ ಇವರಲ್ಲೆಲ್ಲ ಎಲ್ಲಿ ಅಡಗಿ ಕೂತಿರುತ್ತೋ ಗೊತ್ತಿಲ್ಲ.  ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನದ ತಂಡಗಳು ಮುಖಾಮುಖಿಯಾದ ಕೂಡಲೇ ಇವರೊಳಗಿನ ದೇಶಪ್ರೇಮ ಜ್ವಾಲಾಮುಖಿಯಂತೆ ಸಿಡಿದು ಬೀದಿಬೀದಿಗಳಲ್ಲಿ ಹರಿಯತೊಡಗುತ್ತದೆ.  ಕ್ರಿಕೆಟ್ ಎನ್ನುವುದು ಭಾರತದ ಹೆಮ್ಮೆ ಹೇಗೋ ಹಾಗೆ ದೌರ್ಬಲ್ಯ ಕೂಡಾ.
ಜನತೆಯ ದೌರ್ಬಲ್ಯದ ಹುಡುಕಾಟದಲ್ಲಿರುವ ರಾಜಕಾರಣಿಗಳು ಕ್ರಿಕೆಟ್ ಕಾಲ ಪ್ರಾರಂಭವಾಯಿತೆಂದರೆ ಒಮ್ಮಿಂದೊಮ್ಮೆಲೇ ಕ್ರಿಕೆಟ್ ಪ್ರೇಮಿಗಳಾಗುವುದು ಇದೇ ಕಾರಣಕ್ಕಾಗಿ. ಪಂದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದರೆ ಸಾಕ್ಷಾತ್ ಪ್ರಧಾನಮಂತ್ರಿಗಳೇ ಸ್ಟೇಡಿಯಂಗೆ ಬಂದಿಳಿಯುತ್ತಾರೆ.

ಮನಮೋಹನ್‌ಸಿಂಗ್ ಅವರು ತಾನು ಹೋಗಿದ್ದು ಮಾತ್ರವಲ್ಲ ಪಾಕಿಸ್ತಾನದ ಪ್ರಧಾನಿಯನ್ನೂ ಕರೆಸಿ ಪಕ್ಕದಲ್ಲಿ ಕೂರಿಸಿಕೊಂಡಿದ್ದರು. ಅಲ್ಲಿ ಭಾರತದ ಗೆಲುವಿಗೆ ಚಪ್ಪಾಳೆತಟ್ಟಿ ‘ದೇಶಪ್ರೇಮ’ ಮೆರೆದಿದ್ದಾರೆ. ಇದು ಕೇವಲ ಕ್ರಿಕೆಟ್ ಮೇಲಿನ ಪ್ರೀತಿ ಖಂಡಿತ ಅಲ್ಲ. ಅಂತಹ ಪ್ರೀತಿ ಹೊಂದಿದ್ದರೆ ವಿಶ್ವಕಪ್‌ನ ಸೆಮಿಫೈನಲ್‌ಗೆ ಯಾಕೆ ಹೋಗಬೇಕಿತ್ತು, ಫೈನಲ್ ನೋಡಲು ಹೋಗಬಹುದಿತ್ತಲ್ಲ?
ಕ್ರಿಕೆಟ್ ಎನ್ನುವ ಆಟ ಇಂದು ಭಾರತ ಮತ್ತು ಪಾಕಿಸ್ತಾನದ ಮನಸ್ಸುಗಳನ್ನು ಬೆಸೆಯುವ ಸಾಮರ್ಥ್ಯವನ್ನು ಉಳಿಸಿಕೊಂಡಿಲ್ಲ, ಯಾಕೆಂದರೆ ಇಂದಿನ ಕ್ರಿಕೆಟ್ ಕೇವಲ ಕ್ರೀಡೆಯಾಗಿ ಉಳಿದಿಲ್ಲ. ಒಂದೆಡೆ ಉದ್ಯಮ, ರಾಜಕೀಯ ಮತ್ತು ಅಪರಾಧ ಜಗತ್ತುಗಳ ನೆರಳು ಅದರ ಮೇಲೆ ಚಾಚಿದ್ದರೆ ಇನ್ನೊಂದೆಡೆ ಅದು ಮನಸ್ಸುಗಳನ್ನು ಒಡೆಯುವ ಅಸ್ತ್ರವಾಗಿ ಹೋಗಿದೆ.

ಇದಕ್ಕೆ ಎರಡೂ ದೇಶಗಳ ರಾಜಕಾರಣಿಗಳು ಮತ್ತು ಕ್ರಿಕೆಟ್‌ನ ಹುಚ್ಚು ಅಭಿಮಾನಿಗಳು ಕಾರಣ. ಕ್ರಿಕೆಟ್‌ನ ಸೋಲು-ಗೆಲುವುಗಳು ದೇಶದ ಸೋಲು-ಗೆಲುವು ಎಂದು ತಿಳಿದುಕೊಳ್ಳುವಂತಹ ಸಮೂಹಸನ್ನಿ ಹರಡಿರುವಾಗ ಯಾವ ಬಗೆಯ ಸೌಹಾರ್ದತೆಯ ಸ್ಥಾಪನೆ ಸಾಧ್ಯ? ಇಂತಹ ಪರಿಸ್ಥಿತಿಯಲ್ಲಿ ಸ್ಟೇಡಿಯಂನಲ್ಲಿ ತುಂಬಿ ತುಳುಕುತ್ತಿದ್ದ ದೇಶದ ಕ್ರಿಕೆಟ್ ಅಭಿಮಾನಿಗಳ ಜೈಕಾರ, ಚೀತ್ಕಾರಗಳು ಮಾತ್ರವಲ್ಲ ಗೆದ್ದ ಭಾರತವನ್ನು ಅಭಿನಂದಿಸಲು ಪ್ರಧಾನಿ ಹೊಡೆದ ಚಪ್ಪಾಳೆ ಕೂಡಾ ತನಗೆ ಮಾಡುತ್ತಿರುವ ಅವಮಾನ ಎಂದು ಪಕ್ಕದಲ್ಲಿ ಕೂತ ಪಾಕಿಸ್ತಾನದ ಪ್ರಧಾನಿ ತಿಳಿದುಕೊಂಡರೆ ಆಶ್ಚರ್ಯವೇನಿದೆ? ಇದರಿಂದ ಏನನ್ನು ಸಾಧಿಸಿದಂತಾಯಿತು?ಅದೂ ಪಾಕಿಸ್ತಾನದ ರಾಜಕೀಯ ವ್ಯವಸ್ಥೆಯಲ್ಲಿ ದುರ್ಬಲ ಸ್ಥಾನಮಾನ ಹೊಂದಿರುವ ಪ್ರಧಾನಿಯನ್ನು ಪಕ್ಕದಲ್ಲಿ ಕೂರಿಸಿಕೊಂಡು. ಆ ದೇಶವನ್ನು ಮಾತುಕತೆಯ ಮೇಜಿಗೆ ಎಳೆದು ತರುವ ಸಾಮರ್ಥ್ಯವಾದರೂ ಗಿಲಾನಿ ಅವರಿಗೆಲ್ಲಿದೆ?
ಕೇವಲ ಅಗ್ಗದ ಜನಪ್ರಿಯತೆ ಗಳಿಸುವ ಉದ್ದೇಶದ ಇಂತಹ ರಾಜತಾಂತ್ರಿಕ ಕಸರತ್ತುಗಳಿಂದ ಎರಡು ದೇಶಗಳ ಸಂಬಂಧ ಸುಧಾರಣೆಯಾಗಲಾರದು. ಇದಕ್ಕಾಗಿ ಎರಡೂ ದೇಶಗಳ ನಾಯಕರು ಸವೆದ ದಾರಿಯನ್ನೇ ಮತ್ತೆ ತುಳಿಯದೆ ಹೊಸದಾರಿ ಕಂಡುಕೊಳ್ಳುವ ದಿಟ್ಟತನ ಮತ್ತು ಅಪ್ರಿಯ ನಿರ್ಧಾರ ಕೈಗೊಳ್ಳುವ ರಾಜಕೀಯ ಇಚ್ಛಾಶಕ್ತಿ ತೋರಬೇಕು. ಹಿಂದಿನ ಇಬ್ಬರು ಪ್ರಧಾನಿಗಳು ಈ ಕೆಲಸ ಮಾಡಿದ್ದಾರೆ.
ಅವರಲ್ಲೊಬ್ಬರು ಇಂದಿರಾಗಾಂಧಿ, ಇನ್ನೊಬ್ಬರು ಅಟಲಬಿಹಾರಿ ವಾಜಪೇಯಿ. ಇವರಿಬ್ಬರ ಕಾಲದಲ್ಲಿಯೇ ಕ್ರಮವಾಗಿ ಶಿಮ್ಲಾ ಮತ್ತು ಆಗ್ರಾ ಶೃಂಗಸಭೆಗಳು ನಡೆದದ್ದು. ಆ ನಾಯಕರ ಅದೃಷ್ಟವೇನೆಂದರೆ ಅವರ ಕಾಲದಲ್ಲಿ ಪಾಕಿಸ್ತಾನದಲ್ಲಿ ಕ್ರಮವಾಗಿ ಜುಲ್ಫೆಕರ್ ಅಲಿ ಭುಟ್ಟೋ ಮತ್ತು ಪರ್ವೇಜ್ ಮುಷರಫ್ ಎಂಬ ಇಬ್ಬರು ಬಲಿಷ್ಠ ನಾಯಕರಿದ್ದರು. ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನವನ್ನು ಹಣಿದುಹಾಕಿ ಆರೇ ತಿಂಗಳ ಅವಧಿಯಲ್ಲಿ ಮತ್ತೆ ಆ ದೇಶವನ್ನು ಮಾತುಕತೆಯ ಮೇಜಿಗೆ ಎಳೆದುತಂದ ಕೀರ್ತಿ ಇಂದಿರಾಗಾಂಧಿಯವರದ್ದು. ಸೋಲಿನಿಂದ ಅವಮಾನಕ್ಕೀಡಾಗಿದ್ದರೂ ವ್ಯತಿರಿಕ್ತವಾದ ಜನಾಭಿಪ್ರಾಯಕ್ಕೆ ಅಂಜದೆ ಮಾತುಕತೆಗೆ ಬಂದದ್ದು ಭುಟ್ಟೋ ಅವರ ವ್ಯಕ್ತಿತ್ವದ ಶಕ್ತಿ.
 ಇಬ್ಬರೂ ಪ್ರಧಾನಿಗಳಿಗೆ ತಮ್ಮ ದೇಶಗಳಲ್ಲಿ ಅಪಾರ ಜನಪ್ರಿಯತೆಯನ್ನು ತಂದುಕೊಡಬಲ್ಲ ಯಾವ ಅಂಶಗಳೂ ಶಿಮ್ಲಾ ಒಪ್ಪಂದದಲ್ಲಿ ಇರಲಿಲ್ಲ ಎನ್ನುವುದು ಗಮನಿಸುವಂತಹದ್ದು. ಆದರೆ ಇಬ್ಬರೂ ಕೂಡಾ ಯಾವುದೇ ಒಪ್ಪಂದದ ಮೂಲಸೂತ್ರವಾದ ‘ಕೊಟ್ಟು ತೆಗೆದುಕೊಳ್ಳುವ’ ಔದಾರ್ಯ ತೋರಿದ್ದರು. ಸೋತ ದೇಶದ ನಾಯಕನಿಗೆ ಮುಜುಗರವಾಗದಂತೆ, ಆತ ತನ್ನ ದೇಶಕ್ಕೆ ಹಿಂದಿರುಗಿದಾಗ ಜನರ ವಿರೋಧಕ್ಕೆ ಬಲಿಯಾಗದಂತೆ ಇಂದಿರಾಗಾಂಧಿ ಎಚ್ಚರಿಕೆಯಿಂದ ಭುಟ್ಟೋ ಅವರನ್ನು ನಡೆಸಿಕೊಂಡಿದ್ದರು.
‘1971ರ ಡಿಸೆಂಬರ್ 17ರಂದು ನಡೆದ ಕದನವಿರಾಮದ ನಂತರ ಗುರುತುಮಾಡಲಾಗಿದ್ದ ಗಡಿರೇಖೆಯನ್ನು ನಿಯಂತ್ರಣ ರೇಖೆಯನ್ನಾಗಿ ಎರಡೂ ದೇಶಗಳು ಯಾವುದೇ ಪೂರ್ವಗ್ರಹ ಇಲ್ಲದೆ ಒಪ್ಪಿಕೊಳ್ಳಬೇಕು...’ ಎನ್ನುವುದು ಶಿಮ್ಲಾ ಒಪ್ಪಂದದ ಮಹತ್ವದ ಅಂಶ. ಈ ನಿಯಂತ್ರಣ ರೇಖೆಯೇ ಪಾಕಿಸ್ತಾನ ಆಕ್ರಮಿತ ಕಾಶ್ಮೆರ ಮತ್ತು ಭಾರತದ ನಿಯಂತ್ರಣದಲ್ಲಿರುವ ಕಾಶ್ಮೆರವನ್ನು ಪ್ರತ್ಯೇಕಗೊಳಿಸಿರುವುದು.

ಕಾಶ್ಮೀರದ ಮೇಲೆ ಸತತವಾಗಿ ಹಕ್ಕುಸ್ಥಾಪನೆ ಮಾಡುತ್ತಾ ಬಂದ ಮತ್ತು ಈ ವಿವಾದವನ್ನು ವಿಶ್ವಸಂಸ್ಥೆಯ ವರೆಗೆ ಎಳೆದುಕೊಂಡು ಹೋಗಿದ್ದ ಪಾಕಿಸ್ತಾನ ಮೊದಲ ಬಾರಿ ಅದನ್ನು ಬಿಟ್ಟುಕೊಟ್ಟದ್ದು ಶಿಮ್ಲಾ ಒಪ್ಪಂದದ ಮೂಲಕವೇ. ಅಷ್ಟು ಮಾತ್ರವಲ್ಲ ಇಬ್ಬರು ನಾಯಕರ ನಡುವೆ ಮೌಖಿಕವಾದ ಒಪ್ಪಂದವೊಂದು ಕೂಡಾ ಆ ಸಮಯದಲ್ಲಿ ನಡೆದಿತ್ತು.
ಆದರೆ ಅದು ನಡೆದಿದ್ದು ಮಾತುಕತೆ ನಡೆಯುತ್ತಿದ್ದ ಅಧಿಕೃತ ಬಂಗಲೆಯಲ್ಲಿ ಅಲ್ಲ, ಯಾಕೆಂದರೆ ಅಲ್ಲಿ ಆಗಲೇ ಪಾಕಿಸ್ತಾನದ ಗೂಢಚರ್ಯೆ ಸಂಸ್ಥೆಯಾದ ಐಎಸ್‌ಐ ಮಾತು ಕದ್ದಾಲಿಕೆಯ ಉಪಕರಣಗಳನ್ನು ಜೋಡಿಸಿಟ್ಟಿತ್ತಂತೆ. ಇದಕ್ಕಾಗಿ ಭುಟ್ಟೋ ಇಂದಿರಾಗಾಂಧಿಯವರನ್ನು ವಾಯುವಿಹಾರಕ್ಕೆ ಕರೆದೊಯ್ದು ‘ನಿಯಂತ್ರಣ ರೇಖೆಯನ್ನು  ಕ್ರಮೇಣ ‘ಅಂತರರಾಷ್ಟ್ರೀಯ ಗಡಿರೇಖೆ’ಯನ್ನಾಗಿ ಒಪ್ಪಿಕೊಳ್ಳುವ ಭರವಸೆ ನೀಡಿದ್ದು ಈಗ ರಹಸ್ಯವಾಗಿ ಉಳಿದಿಲ್ಲ.

ಆ ವಾಗ್ದಾನವನ್ನು ಲಿಖಿತ ರೂಪದಲ್ಲಿ ನೀಡಲು ಸಾಧ್ಯವಾಗದ ಭುಟ್ಟೋ ಅವರ ಅಸಹಾಯಕತೆಯನ್ನು ಇಂದಿರಾಗಾಂಧಿ ಅರ್ಥಮಾಡಿಕೊಂಡಿದ್ದರು. ಜುಲ್ಫಿಕರ್ ಅಲಿ ಭುಟ್ಟೋ ಅವರ ಪಾಲಿಗೆ ಶಿಮ್ಲಾ ಒಪ್ಪಂದದ ಲಿಖಿತ ಅಂಶಗಳು ಕೂಡಾ ತನ್ನ ದೇಶದಲ್ಲಿ ಜನಪ್ರಿಯತೆಯನ್ನು ತಂದುಕೊಡುವಂತಹದ್ದಾಗಿರಲಿಲ್ಲ ಎನ್ನುವುದಕ್ಕೆ ಅವರ ಬದುಕಿನ ಅಂತ್ಯವೇ ಸಾಕ್ಷಿ. ಅಂತಿಮವಾಗಿ ಭುಟ್ಟೋ ದೇಶದ್ರೋಹಿ ಎಂಬ ಆರೋಪ ಹೊತ್ತು ಗಲ್ಲಿಗೇರಬೇಕಾಯಿತು.
ಇಂದಿರಾಗಾಂಧಿಯವರು ಕೂಡಾ ಒಂದು ಸಣ್ಣ ರಾಜಿ ಮಾಡಿಕೊಂಡಿದ್ದರು. ಆದರೆ ಅದು ಭಾರತದಲ್ಲಿ ದೊಡ್ಡ ಸುದ್ದಿಯಾಗಲೇ ಇಲ್ಲ. ಬಾಂಗ್ಲಾ ಯುದ್ಧದ ವೇಳೆ ಭಾರತದ ಸೇನೆ ಆಕ್ರಮಿಸಿಕೊಂಡಿದ್ದ ಈಗಿನ ಪಾಕ್ ಆಕ್ರಮಿತ ಕಾಶ್ಮೆರದಲ್ಲಿದ್ದ (ಪಿಒಕೆ) ಸೇನೆಯನ್ನು ಹಿಂದೆಗೆದುಕೊಳ್ಳಲು ಇಂದಿರಾಗಾಂಧಿ ಒಪ್ಪಿಕೊಂಡಿದ್ದರು. ಅದರಿಂದಾಗಿಯೇ ಭಾರತ ತನ್ನ ‘ಬಲಜುಟ್ಟು’ ಕಳೆದುಕೊಂಡಿದ್ದು. ಭಾರತದ ಅಧಿಕೃತ ಭೂಪಟದಲ್ಲಿ ಕಾಣುವ ದೇಶದ ತಲೆಯ ಎಡ-ಬಲಗಳ ಎರಡು ಜುಟ್ಟುಗಳ ಮೇಲೆ ಭಾರತಕ್ಕೆ ಈಗ ಯಾವ ನಿಯಂತ್ರಣವೂ ಇಲ್ಲ.

ಅವೆರಡೂ ಪಾಕಿಸ್ತಾನ ಮತ್ತು ಚೀನಾದ ವಶದಲ್ಲಿವೆ. ಬಲಭಾಗದ ಜುಟ್ಟು ಇರುವ ಪ್ರದೇಶವೇ ಸುಮಾರು 78,000 ಚದರ ಕಿ.ಮೀ.ವಿಸ್ತೀರ್ಣದ ಪಿಒಕೆ. ಪಾಕಿಸ್ತಾನದ ಪ್ರಕಾರ ಅದು ಆಜಾದ್ ಕಾಶ್ಮೆರ. ಆ ಕಾಲದಲ್ಲಿ ಇಂದಿರಾಗಾಂಧಿಯವರ ‘ಉಡುಗೊರೆ’ಯ ಪರಿಣಾಮವನ್ನು ಯಾರೂ ಊಹಿಸಲು ಹೋಗಿರಲಿಲ್ಲ, ಈಗಷ್ಟೇ ಅರಿವಿಗೆ ಬರುತ್ತಿದೆ.
ಈಗ ಭಾರತದೊಳಗೆ ನುಸುಳಿಕೊಂಡು ಬರುವ ಭಯೋತ್ಪಾದಕರಿಗೆ ಪಾಕಿಸ್ತಾನದ ಸೇನೆ ಮತ್ತು ಐಎಸ್‌ಐ ತರಬೇತಿ ನೀಡುತ್ತಿರುವ ಶಿಬಿರಗಳು ಇರುವುದು ದುದನಿಯಾಲ್‌ನಿಂದ ಬಿಂಬರ್ ವರೆಗಿನ ನಿಯಂತ್ರಣ ರೇಖೆಗೆ ಒತ್ತಿಕೊಂಡಿರುವ ಪಿಒಕೆ ಪ್ರದೇಶದಲ್ಲಿ. ಭುಟ್ಟೋ ಅನಧಿಕೃತವಾಗಿ ಕಾಶ್ಮೀರವನ್ನು ಮತ್ತು ಇಂದಿರಾಗಾಂಧಿಯವರು ಅಧಿಕೃತವಾಗಿ ಪಿಒಕೆಯನ್ನು ಬಿಟ್ಟುಕೊಟ್ಟಿದ್ದರು. ಶಿಮ್ಲಾ ಒಪ್ಪಂದವನ್ನು ಬಿಟ್ಟು ಭಾರತ-ಪಾಕಿಸ್ತಾನ ಸಂಬಂಧ ಸುಧಾರಣೆಗೆ ಈಗಲೂ ಬೇರೆ ದಾರಿಯಾವುದಾದರೂ ಇದೆಯೇ?
ಇಂದಿರಾಗಾಂಧಿಯವರ ನಂತರ ಭಾರತ-ಪಾಕಿಸ್ತಾನ ಸಂಬಂಧ ಸುಧಾರಣೆಗೆ ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ಅಟಲಬಿಹಾರಿ ವಾಜಪೇಯಿ. ‘ಮನೆಯೊಳಗಿನ ಶತ್ರು’ಗಳ ಕಾಟದ ನಡುವೆಯೂ ಅವರು ಮಾಡಿದ ಸಾಧನೆ ನೆನಪಿಸಿಕೊಳ್ಳುವಂತಹದ್ದು. ಒಮ್ಮೊಮ್ಮೆ ತನ್ನ ಸರ್ಕಾರದೊಳಗೆ ಏನು ನಡೆಯುತ್ತಿದೆ ಎನ್ನುವುದೂ ಗೊತ್ತಿರದಿದ್ದ ವಾಜಪೇಯಿ ಅವರಿಗೆ ವಿದೇಶಾಂಗ ವ್ಯವಹಾರದ ಬಗ್ಗೆ ಮಾತ್ರ ಉಳಿದವರನ್ನು ಚಕಿತಗೊಳಿಸಬಲ್ಲಂತಹ ಒಳನೋಟ ಇತ್ತು. ಕಾಶ್ಮೀರ ಸಮಸ್ಯೆಯ ಇತ್ಯರ್ಥಕ್ಕಾಗಿ ನಿರಂತರವಾಗಿ ಪ್ರಯತ್ನ ಮಾಡಿದ್ದ ಅವರು ಉದ್ದೇಶಪೂರ್ವಕವಾಗಿ ‘ಸವೆದ ಹಾದಿ ತುಳಿಯದೆ’ ಹೊಸಹಾದಿಯಲ್ಲಿಯೇ ಹೆಜ್ಜೆಹಾಕಿದ್ದರು.

ಲಾಹೋರ್ ಬಸ್ ಯಾತ್ರೆಯ ಶಾಂತಿ ಪ್ರಯತ್ನಕ್ಕೆ ಪಾಕಿಸ್ತಾನ ಕಾರ್ಗಿಲ್ ಯುದ್ದದ ಉಡುಗೊರೆ ನೀಡಿದರೂ ಅವರು ಶಾಂತಿಸ್ಥಾಪನೆಯ ಪ್ರಯತ್ನ ನಿಲ್ಲಿಸಿರಲಿಲ್ಲ. 2000ನೇ ವರ್ಷದಲ್ಲಿ ರಮ್ಜಾನ್ ತಿಂಗಳ ಕದನವಿರಾಮ ಘೋಷಿಸಿದ ನಂತರ ಜಮ್ಮು ಮತ್ತು ಕಾಶ್ಮೆರದಲ್ಲಿ ಮಾತ್ರವಲ್ಲ  ಕೆಂಪುಕೋಟೆ, ಅಕ್ಷರಧಾಮಗಳ ಮೇಲೂ ಉಗ್ರರ ದಾಳಿ ನಡೆಯಿತು. ಅಂತಿಮವಾಗಿ ಸಂಸತ್‌ಭವನದ ಮೇಲೆಯೇ ಭಯೋತ್ಪಾದಕರು ಎರಗಿಬಿದ್ದರು. ಹೀಗಿದ್ದರೂ ವಾಜಪೇಯಿ ಸಂಬಂಧ ಸುಧಾರಣೆಯ ಪ್ರಯತ್ನವನ್ನು ನಿಲ್ಲಿಸಿರಲಿಲ್ಲ.
ಪ್ರಧಾನಿ ಮನಮೋಹನ್‌ಸಿಂಗ್ ಅವರ ಕ್ರಿಕೆಟ್ ಡಿಪ್ಲೊಮೆಸಿಯಲ್ಲಿ ಹೊಸದೇನಿಲ್ಲ. ಇದು  ವಾಜಪೇಯಿ ಅವರು ಮಾಡಿಬಿಟ್ಟದ್ದು. ‘ದೇಶದ ಮನಸ್ಸುಗಳು ಒಂದಾಗಬೇಕಾದರೆ ಮೊದಲು ಜನರ ಮನಸ್ಸುಗಳು ಒಂದಾಗಬೇಕು. ಇದು ಕೇವಲ ರಾಜತಾಂತ್ರಿಕ ಮಟ್ಟದಲ್ಲಿ ನಡೆಯುವ ಮಾತುಕತೆಗಳಿಂದ ಸಾಧ್ಯ ಇಲ್ಲ. ದೇಶ-ಭಾಷೆಗಳ ಗಡಿಯನ್ನು ಮೀರಿದ ಕ್ರೀಡೆ, ಸಂಗೀತ, ಕಲೆ, ನಾಟಕ, ಚಲನಚಿತ್ರಗಳ ಮೂಲಕ ಮನಸ್ಸು ಒಂದಾಗಲು ಸಾಧ್ಯ’ ಎಂದು ಅವರು ಹೇಳುತ್ತಿದ್ದರು.
ಈ ಹಿನ್ನೆಲೆಯಲ್ಲಿಯೇ ಎರಡು ದೇಶಗಳ ಮನಸ್ಸನ್ನು ಬೆಸೆಯುವ ‘ಜನಸಂಪರ್ಕ ಮತ್ತು ವಿಶ್ವಾಸನಿರ್ಮಾಣ’ದ ಡಿಪ್ಲೊಮೆಸಿಯ ಹಾದಿ ತೆರೆದುಕೊಂಡದ್ದು. ಸ್ಥಗಿತಗೊಂಡಿದ್ದ ವಿಮಾನ-ರೈಲು-ಹಡಗು ಸಂಚಾರ, ಶ್ರಿನಗರ-ಮುಜಾಫರ್‌ನಗರ ನಡುವೆ ಬಸ್‌ಸಂಚಾರ, ಮಕ್ಕಳಿಗೆ ಚಿಕಿತ್ಸಾ ಸೌಲಭ್ಯ, ವೀಸಾ ಕ್ಯಾಂಪ್ ಸ್ಥಾಪನೆಯ ಜತೆ ನಿಂತುಹೋಗಿದ್ದ ಉಭಯ ದೇಶಗಳ ನಡುವಿನ ಕ್ರಿಕೆಟ್ ಆಟಕ್ಕೆ ಚಾಲನೆ ನೀಡಿದ್ದು ಕೂಡಾ ವಾಜಪೇಯಿ.
 ಆ ಕಾಲದಲ್ಲಿ ಇವು ಯಾವುದೂ ಜನಪ್ರಿಯ ಕಾರ್ಯಕ್ರಮಗಳಾಗಿರಲಿಲ್ಲ. ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಆ ದೇಶವನ್ನು ಮುಗಿಸಿಬಿಡಬೇಕೆಂದು ಗರ್ಜಿಸುತ್ತಿರುವವರು ವಾಜಪೇಯಿ ಪರಿವಾರದಲ್ಲಿ ಮಾತ್ರವಲ್ಲ, ಹೊರಗೆಯೂ ಇದ್ದರು. ಪರ್ವೇಜ್ ಮುಷರಫ್ ಅವರ ಮೇಲೆಯೂ ಇದೇ ರೀತಿಯ ಒತ್ತಡಗಳಿದ್ದವು. ಒಂದೆಡೆ ಉಗ್ರಗಾಮಿ ಸಂಘಟನೆಗಳು ಇನ್ನೊಂದೆಡೆ ಧಾರ್ಮಿಕ ನಾಯಕರು ಅವರ ಚಲನವಲನದ ಮೇಲೆ ಕಣ್ಣಿಟ್ಟಿದ್ದವು.

ಆದರೆ ಶಾಂತಿ ಸ್ಥಾಪನೆಗೆ ಮುಷರಫ್ ಅವರ ಗುಪ್ತ ಸಹಕಾರ ಇದ್ದ ಕಾರಣದಿಂದಾಗಿಯೇ ಇಬ್ಬರ ಪ್ರಯತ್ನಗಳು ಸ್ವಲ್ಪ ಮಟ್ಟಿಗಾದರೂ ಯಶಸ್ಸು ಕಾಣಲು ಸಾಧ್ಯವಾಗಿದ್ದು. ಆದರೆ ಈ ಇಬ್ಬರು ನಾಯಕರು ಭುಟ್ಟೋ ಮತ್ತು ಇಂದಿರಾಗಾಂಧಿಯವರಷ್ಟು ಅದೃಷ್ಟಶಾಲಿಗಳಾಗಿರಲಿಲ್ಲ. ಈ ಕಾರಣದಿಂದಾಗಿಯೇ ಆಗ್ರಾ ಶೃಂಗಸಭೆ ಭಂಗಗೊಂಡದ್ದು.
ಭಾರತದ ಕಡೆಯಿಂದ ಆಗ್ರಾ ಶೃಂಗಸಭೆಯನ್ನು ವಿಫಲಗೊಳಿಸಿದ ‘ಖಳನಾಯಕಿ’ ಈಗ ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕಿ. ಮಾತುಕತೆಯಲ್ಲಿ ಕಾಶ್ಮೀರವೇ ಮುಖ್ಯ ವಿಷಯ ಎಂದು ಪಾಕಿಸ್ತಾನ ಪಟ್ಟು ಹಿಡಿದಿತ್ತು, ಭಯೋತ್ಪಾದನೆಯ ಬಗ್ಗೆ ಮೊದಲು ತೀರ್ಮಾನಿಸುವ ಎನ್ನುತ್ತಿತ್ತು ಭಾರತ. ಒಂದು ಹಂತದಲ್ಲಿ ಕಾಶ್ಮೀರ ವಿಷಯವನ್ನು ಕೈಬಿಡುವ ಇಂಗಿತವನ್ನು ಪರ್ವೇಜ್ ಮುಷರಫ್ ನೀಡಿದ್ದರಂತೆ.ಇದನ್ನು ಹೇಗೋ ತಿಳಿದ ಸಚಿವೆ ಸುಷ್ಮಾಸ್ವರಾಜ್ ಇದನ್ನು ಭಾರತದ ಗೆಲುವು ಎಂಬಂತೆ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದರು. ತಕ್ಷಣ ಐಎಸ್‌ಐ ಮತ್ತು ಜೆಹಾದಿಗಳ ಕಡೆಯಿಂದ ವಿರೋಧ ಬರಲಾರಂಭಿಸಿತು.

ಈ ಸಂದೇಶವನ್ನು ಐಎಎಸ್ ಜತೆ ಸಂಪರ್ಕ ಹೊಂದಿದ್ದ ವಿದೇಶಾಂಗ ವ್ಯವಹಾರ ಸಚಿವ ಅಬ್ದುಲ್ ಸತ್ತಾರ್ ಅವರು ಮುಷರಫ್ ಅವರಿಗೆ ತಲುಪಿಸಿದ ನಂತರವೇ ಮುಷರಫ್ ಮುಷ್ಠಿ ಬಿಗಿಗೊಳಿಸಿದ್ದು. ಇನ್ನೇನು ಘೋಷಣೆ ಹೊರಬೀಳಲಿದೆ ಎಂದು ಆಗ್ರಾದ ಮೊಗಲ್ ಶೆರಟನ್ ಮಾಧ್ಯಮಕೇಂದ್ರದಲ್ಲಿ ಶೃಂಗಸಭೆಯ ವರದಿಗಾಗಿ ಹೋಗಿದ್ದ ನಾವೆಲ್ಲ ಕಾಯುತ್ತಿದ್ದರೆ ಪಕ್ಕದ ಜೇಪಿ ಪ್ಯಾಲೇಸ್‌ನಲ್ಲಿ ತಂಗಿದ್ದ ಪರ್ವೇಜ್‌ಮುಷರಫ್ ಪಾಕಿಸ್ತಾನದ ವಿಮಾನ ಹತ್ತಿದ್ದರು.

ಆಗ್ರಾ ಶೃಂಗಸಭೆಯ ವೈಫಲ್ಯದ ಹೊರತಾಗಿಯೂ ಉಭಯದೇಶಗಳ ಸಂಬಂಧ ಸುಧಾರಣೆಯಲ್ಲಿ ವಾಜಪೇಯಿ ವಹಿಸಿದ್ದ ಪಾತ್ರದಿಂದ ಕಲಿಯುವುದಿದೆ. ಇದಕ್ಕಾಗಿ ಮನಮೋಹನ್‌ಸಿಂಗ್ ಇತಿಹಾಸದ ಪುಟಗಳನ್ನು ತಿರುವಿಹಾಕಬೇಕು, ಪಾಕ್ ಪ್ರಧಾನಿ ಜತೆ ಕೂತು ಕ್ರಿಕೆಟ್ ನೋಡಿದರಷ್ಟೇ ಸಾಲದು