Monday, August 22, 2011

ಬೀದಿಗಿಳಿದು ಕೂಗಿಕೊಂಡವರಷ್ಟೇ ದೇಶಪ್ರೇಮಿಗಳೇ?

ಕೇಂದ್ರ ಸರ್ಕಾರದ ಮೂರ್ಖತನ ಮತ್ತು ತಥಾಕಥಿತ ನಾಗರಿಕ ಸಮಿತಿಯ ಹಟಮಾರಿತನದ ನಡುವಿನ ಹಗ್ಗಜಗ್ಗಾಟದಲ್ಲಿ ಸಿಕ್ಕಿಹಾಕಿಕೊಂಡು ದೇಶ ಒದ್ದಾಡುತ್ತಿದೆ.
ಸರ್ಕಾರದ ಲೋಕಪಾಲ ಮಸೂದೆಯನ್ನು ವಿರೋಧಿಸುವವರು `ಸಂಸದೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರೋಧಿಗಳು~ ಎಂದು ಯುಪಿಎ ಆರೋಪಿಸುತ್ತಿದೆ.
ಜನಲೋಕಪಾಲ ಮಸೂದೆಯನ್ನು ಒಪ್ಪದವರೆಲ್ಲ `ಕಾಂಗ್ರೆಸ್ ಏಜೆಂಟ್~ಗಳೆಂದು ನಾಗರಿಕ ಸಮಿತಿ ಲೇವಡಿ ಮಾಡುತ್ತಿದೆ. ಸಂಸತ್‌ನ ಉಭಯ ಸದನಗಳ ಸದಸ್ಯರ ಒಟ್ಟು ಸಂಖ್ಯೆ 790.
ದೇಶದ ಬೇರೆಬೇರೆ ಕಡೆ ನಡೆಯುತ್ತಿರುವ `ಭ್ರಷ್ಟಾಚಾರ ವಿರೋಧಿ ಚಳವಳಿ~ಯಲ್ಲಿ ಪಾಲ್ಗೊಂಡವರ ಸಂಖ್ಯೆಯನ್ನು ಎಷ್ಟೇ ಹಿಗ್ಗಿಸಿದರೂ ಅದು 25 ಲಕ್ಷ ದಾಟಲಾರದು.
120 ಕೋಟಿ ಜನಸಂಖ್ಯೆಯ ದೇಶದಲ್ಲಿ ಈ 25,00,790 ಮಂದಿ ಸೇರಿ ಉಳಿದವರ ಮೇಲೆ ಸವಾರಿ ಮಾಡುತ್ತಿದ್ದಾರೆ. ಈ ಎರಡು ಗುಂಪುಗಳ ಅರ್ಭಟದಲ್ಲಿ ಯಾವ ಗುಂಪಿಗೂ ಸೇರದೆ ಇರುವವರು ದನಿ ಕಳೆದುಕೊಂಡಿದ್ದಾರೆ.
ಉದಾಹರಣೆಗೆ ಪ್ರಧಾನ ಮಂತ್ರಿ ಮತ್ತು ನ್ಯಾಯಮೂರ್ತಿಗಳನ್ನು ಲೋಕಪಾಲರ ವ್ಯಾಪ್ತಿಗೆ ಸೇರಿಸುವುದನ್ನು ಸರ್ಕಾರ ವಿರೋಧಿಸುತ್ತಿದೆ, ಅವರನ್ನು ಸೇರಿಸಬೇಕೆಂದು ನಾಗರಿಕ ಸಮಿತಿ ಹಟ ಹಿಡಿದು ಕೂತಿದೆ.
`ಲೋಕಪಾಲರ ವ್ಯಾಪ್ತಿಯಲ್ಲಿ ಪ್ರಧಾನಿ ಮತ್ತು ನ್ಯಾಯಮೂರ್ತಿಗಳು ಇರಲಿ, ಅವರ ಜತೆ ಕಾರ್ಪೊರೇಟ್ ಕ್ಷೇತ್ರ, ಧಾರ್ಮಿಕ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳೂ (ಎನ್‌ಜಿಒ) ಇರಲಿ ~ ಎಂದರೆ `ನಿಮ್ಮದು ಮೂರನೇ ಗುಂಪೇನು~ ಎಂದು ಉಳಿದೆರಡು ಗುಂಪುಗಳ ನಾಯಕರು ಬಾಯಿಮುಚ್ಚಿಸುವ ಪ್ರಯತ್ನ ಮಾಡುತ್ತಾರೆಯೇ ವಿನಾ ಉತ್ತರ ನೀಡುವುದಿಲ್ಲ.
ಯಾಕೆಂದರೆ ಹೀಗೆ ಪ್ರಶ್ನಿಸುವ ಎರಡೂ ಗುಂಪುಗಳಲ್ಲಿಯೂ ಲೋಕಪಾಲ ಮಸೂದೆಗಳಿಂದ ಹೊರಗಿಟ್ಟಿರುವ ಮೂರು ವರ್ಗಗಳ ಪ್ರತಿನಿಧಿಗಳಿದ್ದಾರೆ. ಅಗತ್ಯ ಸಂಪನ್ಮೂಲ ಮತ್ತು ಕಾರ‌್ಯಕರ್ತರನ್ನು ಪಡೆಯಲು ಚಳವಳಿಗಾರರಿಗೆ ಈ ವರ್ಗಗಳ ನೆರವು ಬೇಕು.
ರಾಜಕಾರಣದ ಇಂತಹದೇ ಅಗತ್ಯಗಳನ್ನು ಕೂಡಾ  ಈ ವರ್ಗಗಳು ಪೂರೈಸುತ್ತವೆ. ರಾಮ್‌ದೇವ್ ಎಂಬ ಯೋಗಗುರುವನ್ನು ಮೊದಲು ತಲೆಮೇಲೆ ಹೊತ್ತುಕೊಂಡು ಮೆರೆದದ್ದೇ ಈ ವರ್ಗಗಳು. ಆ ಮೂರ್ತಿಭಂಜನ ನಡೆದ ನಂತರ ಈಗ ಅಣ್ಣಾ ಹಜಾರೆ ಎಂಬ ಅಮಾಯಕ ಸಮಾಜಸೇವಕನ ಬೆನ್ನ ಹಿಂದೆ ನಿಂತಿವೆ.
ಇವರೆಲ್ಲರೂ ಕೂಡಿ ಸೃಷ್ಟಿಸಿರುವ ಸಮೂಹಸನ್ನಿಯಲ್ಲಿ ಬಹುಸಂಖ್ಯೆಯಲ್ಲಿರುವ `ಮೌನಿ ಮೂರನೇ ವರ್ಗ~ದ್ದು ಮಾತ್ರವಲ್ಲ, ಅರ್ಭಟಿಸುತ್ತಿರುವ ಎರಡು ಗುಂಪುಗಳ ನಾಯಕರ ದನಿಗಳೂ ಉಡುಗಿಹೋಗಿವೆ.
ಪ್ರಾಮಾಣಿಕವಾಗಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗದ ಅಸಹಾಯಕತೆ ಪ್ರಧಾನಿ ಮನಮೋಹನ್‌ಸಿಂಗ್ ಅವರದ್ದಾದರೆ, ತಿಳುವಳಿಕೆಯ ಕೊರತೆಯಿಂದಾಗಿ ಅನಿವಾರ್ಯವಾಗಿ ಇತರರ ಮೇಲೆ ಅವಲಂಬಿಸಬೇಕಾಗಿರುವ ಅಸಹಾಯಕತೆ ಅಣ್ಣಾ ಹಜಾರೆ ಅವರದ್ದು.
ಮೊದಲನೆಯವರ ಬೆನ್ನ ಹಿಂದೆ `ಅಡಿಯಿಂದ ಮುಡಿ ವರೆಗೆ ಅಣ್ಣಾ ಭ್ರಷ್ಟರು~ ಎಂದು ಹೇಳುತ್ತಿರುವ ಮನೀಷ್ ತಿವಾರಿಯಂತಹ ಬಾಯಿಬಡುಕರು, `ಚಳವಳಿಯ ಹಿಂದೆ ವಿದೇಶಿ ಕೈವಾಡ ಇದೆ~ ಎಂದು ಹೇಳುತ್ತಿರುವ ರಶೀದ್ ದಲ್ವಿ ಅವರಂತಹ ಮೂರ್ಖರು, ಒಬ್ಬ ಸತ್ಯಾಗ್ರಹಿಯನ್ನು ಯಾವ ರೀತಿ ನಡೆಸಿಕೊಳ್ಳಬೇಕೆಂದು ತಿಳಿಯದ ಗೃಹಸಚಿವ ಚಿದಂಬರಮ್ ಅವರಂತಹ ಉದ್ಧಟರು, ಕಪಿಲ್ ಸಿಬಾಲ್ ಅವರಂತಹ ಭಟ್ಟಂಗಿಗಳು ನೆರೆದಿದ್ದಾರೆ.
ಇರುವವರಲ್ಲಿಯೇ ಪ್ರಬುದ್ಧತೆಯಿಂದ ಮಾತನಾಡಬಲ್ಲ ಪ್ರಣಬ್ ಮುಖರ್ಜಿ, ಸಲ್ಮಾನ್ ಖುರ್ಷಿದ್, ಎ.ಕೆ.ಆಂಟನಿ ಅವರ ಮುಖಗಳು ಎಲ್ಲೂ ಕಾಣುತ್ತಿಲ್ಲ. ಪ್ರಧಾನಿ ಮನಮೋಹನ್‌ಸಿಂಗ್ ಅವರನ್ನು ರಕ್ಷಿಸುವುದಕ್ಕಾಗಿ ಭಟ್ಟಂಗಿ ಕೂಟ ಈ ರೀತಿ ಬಹಿರಂಗವಾಗಿ ಸಂಘರ್ಷಕ್ಕೆ ಇಳಿದಿದೆ ಎಂದು ತಿಳಿದುಕೊಳ್ಳಬೇಕಾಗಿಲ್ಲ. ತಮ್ಮನ್ನು ರಕ್ಷಿಸಿಕೊಳ್ಳಲು ಮನಮೋಹನ್‌ಸಿಂಗ್ ಅವರಿಗೆ ಇವರ ರಕ್ಷಣೆಯ ಅಗತ್ಯ ಇರಲಾರದು.
ಕಾಂಗ್ರೆಸ್ ನಾಯಕರ `ಗುಪ್ತ ಕಾರ್ಯಸೂಚಿ~ ಬೇರೆಯೇ ಇದೆ. ಅದು ಮುಂದೊಂದು ದಿನ ಪ್ರಧಾನಿ ಪಟ್ಟ ಏರಲಿದ್ದಾರೆ ಎಂದು ಅವರು ನಂಬಿರುವ ರಾಹುಲ್ ಗಾಂಧಿಯ ಭವಿಷ್ಯವನ್ನು ಸುರಕ್ಷಿತವಾಗಿಡುವುದು.

ಇನ್ನೂ ಬಾಲಲೀಲೆಯಲ್ಲಿಯೇ ಮೈಮರೆತಿರುವ ರಾಹುಲ್‌ಗಾಂಧಿ ತಮ್ಮ ಕುಟುಂಬದ ಭಟ್ಟಂಗಿಗಳ ಮೂರ್ಖ ನಡವಳಿಕೆಯ ಬೋನಿನಲ್ಲಿ ಬಿದ್ದ ಹಾಗೆ ಕಾಣುತ್ತಿದೆ. ಈಗ ನಡೆಯುತ್ತಿರುವ ಚಳವಳಿಯಲ್ಲಿ ಭಾಗಿಯಾಗಿರುವವರ ಮುಖಗಳನ್ನು ಕಣ್ಣುಬಿಟ್ಟು ನೋಡಿದರೆ ತಾನೇನು ಕಳೆದುಕೊಳ್ಳುತ್ತಿದ್ದೇನೆ ಎಂದು ಈ ಯುವನಾಯಕನಿಗೆ ಅರಿವಾಗಬಹುದು.

ಚಳವಳಿಯಲ್ಲಿ ಭಾಗವಹಿಸುತ್ತಿರುವವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ಯುವಕರು. ವರ್ಷ ಕಳೆದಂತೆ ಭಾರತಕ್ಕೆ ಯೌವ್ವನ ಬರುತ್ತಿದೆ. ಈಗಿನ ಒಟ್ಟು ಜನಸಂಖ್ಯೆಯಲ್ಲಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಶೇಕಡಾ 65ರಷ್ಟಿದ್ದಾರೆ.
ಮೊನ್ನೆ ಮೊನ್ನೆ ವರೆಗೆ ಮುದಿ ರಾಜಕಾರಣಿಗಳಿಂದ ಬೇಸತ್ತು ಹೋಗಿರುವ ಯುವಸಮೂಹಕ್ಕೆ ರಾಹುಲ್‌ಗಾಂಧಿ ಅನಿವಾರ್ಯ ಎನ್ನುವ ಸ್ಥಿತಿ ಇತ್ತು. ಈ ಯುವ ಸಮೂಹ ಈಗ ಬೀದಿಗಿಳಿದು ಕಾಂಗ್ರೆಸ್ ವಿರೋಧಿ ಘೋಷಣೆ ಕೂಗುತ್ತಿದೆ.
ಲೋಕಪಾಲರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳನ್ನು ಸೇರಿಸುವುದಕ್ಕೆ ತಮ್ಮ ಒಪ್ಪಿಗೆ ಇದೆ ಎಂದು ಹೇಳುವಷ್ಟು ಧೈರ್ಯ ಇಲ್ಲದ ಈ ಯುವ ನಾಯಕನನ್ನು ಯುವಜನರಾದರೂ ಯಾಕೆ ಒಪ್ಪಿಕೊಳ್ಳಬೇಕು?
ಆಡಳಿತಾರೂಢ ಪಕ್ಷದಲ್ಲಿರುವಂತೆ ಅಣ್ಣಾ ಟೀಮ್‌ನಲ್ಲಿಯೂ `ಅಣ್ಣಾ ಎಂದರೆ ಇಂಡಿಯಾ~ ಎಂದು ಕೂಗುತ್ತಿರುವ ಕಿರಣ್ ಬೇಡಿಯವರಂತಹ ಬಾಯಿ ಬಡುಕರು, `ರಾಜಕಾರಣಿಗಳೆಲ್ಲ ಕಳ್ಳರು~ ಎಂದು ಹೇಳುತ್ತಿರುವ ಅರವಿಂದ್ ಕೇಜ್ರಿವಾಲಾ ಅವರಂತಹ ಸಿನಿಕರು ಇದ್ದಾರೆ. ಇವರಲ್ಲಿಯೇ ಜವಾಬ್ದಾರಿಯುತರಂತೆ ಕಾಣಿಸುತ್ತಿರುವ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆಯವರಂತಹ ನಿವೃತ್ತ ಲೋಕಾಯುಕ್ತರು ಮತ್ತು ಪ್ರಶಾಂತ್ ಭೂಷಣ್ ಅವರಂತಹ ವಕೀಲರೂ ಇದ್ದಾರೆ. ಇವರಿಬ್ಬರು ಭ್ರಷ್ಟಾಚಾರ ನಿರ್ಮೂಲನೆಗಾಗಿ ಕೆಲಸ ಮಾಡಿ ತೋರಿಸಿ ಕೊಟ್ಟವರು.
ನ್ಯಾ.ಸಂತೋಷ್ ಹೆಗ್ಡೆ ಮತ್ತು ಸಹೋದ್ಯೋಗಿಗಳ ಶ್ರಮದಿಂದಾಗಿ ಮಾಜಿ ಸಚಿವರೊಬ್ಬರು ಜೈಲಲ್ಲಿದ್ದಾರೆ, ಮುಖ್ಯಮಂತ್ರಿಗಳು ಮನೆಗೆ ಹೋಗಿದ್ದಾರೆ.
ಬೋಫೋರ್ಸ್, ನರ್ಮದಾ ಆಣೆಕಟ್ಟು, ಅಕ್ರಮ ಗಣಿಗಾರಿಕೆ ಮೊದಲಾದ ಪ್ರಕರಣಗಳು ಸೇರಿದಂತೆ ಕಳೆದ ಹದಿನೈದು ವರ್ಷಗಳಲ್ಲಿ ಸುಮಾರು 500 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ಹೆಚ್ಚು ಕಡಿಮೆ ಉಚಿತವಾಗಿ ವಕೀಲರಾಗಿ ವಾದ ನಡೆಸಿದವರು ಪ್ರಶಾಂತ್ ಭೂಷಣ್. ಆದರೆ ಟಿವಿ ಚಾನೆಲ್‌ಗಳಲ್ಲಿ, ಪತ್ರಿಕೆಗಳಲ್ಲಿ ಬೇಡಿ ಮತ್ತು ಕೇಜ್ರಿವಾಲ್ ಅವರೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವವರು. `ಪ್ರಧಾನಿಯವರನ್ನು ಬೇಕಾದರೆ ಲೋಕಪಾಲರ ವ್ಯಾಪ್ತಿಯಿಂದ ಹೊರಗಿಡುವ~ ಎಂಬ ನ್ಯಾ.ಸಂತೋಷ್ ಹೆಗ್ಡೆ ರಾಜೀಸೂತ್ರವನ್ನು ಈ ದೆಹಲಿ ನಾಯಕರು ಒಪ್ಪುತ್ತಿಲ್ಲ.
  ಒಂದು ಚಳವಳಿಯ ಸೋಲು-ಗೆಲುವು ಅದರ ನಾಯಕತ್ವ, ಉದ್ದೇಶ, ಸಂಘಟನೆ ಮತ್ತು ಹೋರಾಟದ ಮಾರ್ಗವನ್ನು ಅವಲಂಬಿಸಿರುತ್ತದೆ. ಅಣ್ಣಾ ಚಳವಳಿಯ ಉದ್ದೇಶ ಸಾಧುವಾದುದು. ಈ ವರೆಗಿನ ಹೋರಾಟದ ಮಾರ್ಗ ಕೂಡಾ ಜನ ಒಪ್ಪುವಂತಹದ್ದೇ ಆಗಿದೆ. ಆದರೆ ನಾಯಕತ್ವ ಮತ್ತು ಚಳವಳಿಗೆ ಶಕ್ತಿ ತುಂಬಬಲ್ಲ ಸಂಘಟನೆಯಲ್ಲಿನ ದೋಷಗಳು ಈ ಚಳವಳಿಯನ್ನು ಕಾಡುತ್ತಿದೆ.
ಕಿಶನ್ ಬಾಬುರಾವ್ ಹಜಾರೆ ಒಬ್ಬ ಮುಗ್ದ, ಪ್ರಾಮಾಣಿಕ ಸಮಾಜ ಸೇವಕ ಅಷ್ಟೇ. ಅವರ ತಿಳುವಳಿಕೆಯ ಮಟ್ಟ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರಿಗಿಂತ ಹೆಚ್ಚಿಲ್ಲ. ಸಾರ್ವಜನಿಕ ಹೇಳಿಕೆ ನೀಡುವಾಗ ಅಕ್ಕಪಕ್ಕದಲ್ಲಿ ಸಂಭಾಳಿಸಲು ಯಾರಾದರೂ ಇಲ್ಲದೆ ಇದ್ದರೆ ಎಡವಟ್ಟು ಮಾಡಿಕೊಳ್ಳುತ್ತಾರೆ. ಅದು ಅವರ ಮಿತಿ.
ಇದರಿಂದಾಗಿ ಸಂಘಟನೆ ಹಾದಿ ತಪ್ಪುತ್ತಿದೆ. ನಾಯಕತ್ವದ ಈ ದೌರ್ಬಲ್ಯವನ್ನೇ ಬಳಸಿಕೊಂಡು ಬೇರೆಬೇರೆ ಶಕ್ತಿಗಳು ಚಳವಳಿಯ ಒಳ ಪ್ರವೇಶಿಸಿವೆ. 
ಉದಾಹರಣೆಗೆ ಕರ್ನಾಟಕದಲ್ಲಿ ಇದ್ದಕ್ಕಿದ್ದ ಹಾಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೇರಿದಂತೆ ಸಂಘ ಪರಿವಾರದ ಸದಸ್ಯರು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಭಾಗವಹಿಸತೊಡಗಿದ್ದಾರೆ.
ಯುವಜನರು-ವಿದ್ಯಾರ್ಥಿಗಳು ಈ ರೀತಿ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಕ್ರಿಯಾಶೀಲರಾಗುವುದು ಒಳ್ಳೆಯ ಬೆಳವಣಿಗೆ. ಆದರೆ ಕಳೆದ ಮೂರುವರ್ಷಗಳಲ್ಲಿ ಇವರೆಲ್ಲಿದ್ದರು? ಪ್ರಕೃತಿಯನ್ನು ದೇವರೆಂದು ಪೂಜಿಸುವ ಈ ಪರಿವಾರದವರು ಅದೇ ಪ್ರಕೃತಿಯನ್ನು ಅಕ್ರಮ ಗಣಿಗಾರಿಕೆ ಮೂಲಕ ಲೂಟಿ ಹೊಡೆಯುತ್ತಿದ್ದಾಗ ಅದರ ವಿರುದ್ಧ ಸೊಲ್ಲೆತ್ತಲಿಲ್ಲ.
ದೇಶದಲ್ಲಿಯೇ ಅತ್ಯಂತ ಭ್ರಷ್ಟ ರಾಜ್ಯ ಕರ್ನಾಟಕ ಎಂದು ರಾಷ್ಟ್ರೀಯ ಮಾಧ್ಯಮಗಳು ಮತ್ತು ನ್ಯಾಯಾಲಯಗಳು ಹೇಳಿದಾಗ ಇವರ‌್ಯಾರು ಸಿಡಿದೆದ್ದು ಬೀದಿಗಿಳಿಯಲಿಲ್ಲ.
ಲೋಕಾಯುಕ್ತರು ಆರೋಪಿ ಎಂದು ಹೇಳಿದ ಮೇಲೂ ರಾಜೀನಾಮೆ ನೀಡಲು ಮೀನಮೇಷ ಎಣಿಸುತ್ತಿದ್ದ ಮುಖ್ಯಮಂತ್ರಿಯವರ ವಿರುದ್ಧ ಕನಿಷ್ಠ ಹೇಳಿಕೆಯನ್ನೂ ನೀಡಲಿಲ್ಲ. `ನೂತನ ಮುಖ್ಯಮಂತ್ರಿಯ ಆಯ್ಕೆಯಲ್ಲಿ ಶಾಸಕರ ಖರೀದಿ ನಡೆದಿದೆ~ ಎಂದು ಬಿಜೆಪಿ ನಾಯಕರೇ ಹೇಳಿದಾಗಲೂ ಅದನ್ನು ಖಂಡಿಸಬೇಕೆಂದು ಇವರಿಗ್ಯಾರಿಗೂ ಅನಿಸಲಿಲ್ಲ.
ಲೋಕಾಯುಕ್ತ ವರದಿಯಲ್ಲಿ ಆರೋಪಿಗಳೆನಿಸಿಕೊಂಡವರು ರಾಜ್ಯ ಸಚಿವ ಸಂಪುಟಕ್ಕೆ ಸೇರಲು ಒತ್ತಡ ಹೇರುವುದನ್ನು ಇವರು ವಿರೋಧಿಸಲಿಲ್ಲ. ಇವೆಲ್ಲ ಭ್ರಷ್ಟಾಚಾರ ಅಲ್ಲವೇನು?
 ಲೋಕಪಾಲರ ನೇಮಕ ಎಂಬುದು ಭವಿಷ್ಯದಲ್ಲಿನ ಭ್ರಷ್ಟಾಚಾರವನ್ನು ತಡೆಯುವ ಒಂದು ಪ್ರಯತ್ನ. ಆದರೆ ಕರ್ನಾಟಕದಲ್ಲಿ ಈಗಾಗಲೇ ಇರುವ ಲೋಕಾಯುಕ್ತರು ಭ್ರಷ್ಟಾಚಾರವನ್ನು ಪತ್ತೆಹಚ್ಚಿ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿರುವವರಿಗೆ ಯಾವುದು ಮುಖ್ಯ? ಕೇಂದ್ರದಲ್ಲಿ ಲೋಕಪಾಲರ ನೇಮಕಕ್ಕಾಗಿ ನಡೆಸುವ ಹೋರಾಟವೇ? ಇಲ್ಲ, ಈಗಾಗಲೇ ನಮ್ಮಲ್ಲಿರುವ ಲೋಕಾಯುಕ್ತರು ಸಲ್ಲಿಸಿರುವ ವರದಿಯ ಆಧಾರದಲ್ಲಿ ಕೈಗೊಳ್ಳುವ ಕ್ರಮವೇ? ಈ ವರದಿಯನ್ನು ತಕ್ಷಣ ಒಪ್ಪಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಎಬಿವಿಪಿ ಕಾರ‌್ಯಕರ್ತರು ರಾಜ್ಯಸರ್ಕಾರದ ಮೇಲೆ ಒತ್ತಡ ಹೇರುವುದಿಲ್ಲ? ಇದಕ್ಕಾಗಿ ಯಾಕೆ ಉಪವಾಸ ಮಾಡಬಾರದು? ಇಂತಹ ಆತ್ಮವಂಚನೆಯ ನಡವಳಿಕೆಯೇ ಅಣ್ಣಾ ಚಳವಳಿಯಲ್ಲಿ ಭಾಗವಹಿಸುತ್ತಿರುವವರ ಪ್ರಾಮಾಣಿಕತೆಯನ್ನು ಪ್ರಶ್ನಿಸುವಂತೆ ಮಾಡಿರುವುದು. ಇಂತಹವರೇನು ಈ ಚಳವಳಿಯ ಗೌರವ ಹೆಚ್ಚಿಸುವುದಿಲ್ಲ.
ನಾಲ್ಕು ದಿಕ್ಕುಗಳಿಂದಲೂ ಗುರಿ ಇಟ್ಟಿರುವ ಟಿವಿ ಕ್ಯಾಮೆರಾಗಳ ಈ ಕಾಲದಲ್ಲಿ ಪ್ರಾಮಾಣಿಕರು, ಸಜ್ಜನರು, ದೇಶಪ್ರೇಮಿಗಳು ಎಂದು ತೋರಿಸಿಕೊಳ್ಳುವುದು ಬಹಳ ಸುಲಭ.
ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು, ಮುಖಕ್ಕೂ ಅದರ ಬಣ್ಣ ಬಳಿದುಕೊಂಡು ಕ್ಯಾಮೆರಾ ಮುಂದೆ `ಭಾರತ ಮಾತಾ ಕೀ ಜೈ~ ಎಂದು ಗಂಟಲು ಬಿರಿಯುವ ಹಾಗೆ ಕೂಗಿಕೊಂಡರೆ ಸಾಕು. ಹಗಲಲ್ಲಿ ಕಚೇರಿಗೆ ಹೋಗಬೇಕಾಗಿದ್ದರೆ ಸಂಜೆ ಹೊತ್ತು ಬಂದು ನಾಲ್ಕು ದಾರಿಗಳು ಕೂಡುವಲ್ಲಿ ಕ್ಯಾಂಡೆಲ್ ಹಚ್ಚಿದರೂ ಸಾಕು. ಇನ್ನೂ ಸ್ವಲ್ಪ ಸೃಜನಶೀಲರಾಗಿ ಯೋಚನೆ ಮಾಡುವವರು ಬೀದಿ ಗುಡಿಸುವುದು, ಶೂ ಪಾಲಿಷ್ ಮಾಡುವ ಕೆಲಸ ಮಾಡುತ್ತಾರೆ. ಇವೆಲ್ಲವೂ ಬಹಳ ಸುರಕ್ಷಿತವಾದ ವಿಧಾನ.
ಬಹುಶಃ ಈ ಕಲೆಯನ್ನು ಕಲಿತಿದ್ದರೆ ಭೋಪಾಲದ ಶೆಹಲಾ ಮಸೂದ್ ಎಂಬ ಯುವತಿ ಈಗಲೂ ಬದುಕಿರುತ್ತಿದ್ದಳು, ಅವಳ ತಂದೆ ಮಸೂದ್ ಸಿದ್ದಿಕಿ ವೃದ್ಧಾಪ್ಯದ ಕಾಲದಲ್ಲಿ ಮಗಳನ್ನು ಕಳೆದುಕೊಂಡು ರೋದಿಸುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಮಾಹಿತಿ ಹಕ್ಕು ಕಾಯಿದೆಯ ಕಾರ‌್ಯಕರ್ತೆಯಾಗಿದ್ದ ಶೆಹಲಾ ವನ್ಯಮೃಗಗಳ ಹತ್ಯೆ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟದಲ್ಲಿ ತೊಡಗಿದ್ದಳು. ಅದಕ್ಕಾಗಿ ಜೀವತೆತ್ತಳು.
ಈ ರೀತಿಯ ಹೋರಾಟದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಈಕೆ ಮೊದಲನೆಯವಳೇನಲ್ಲ, ಗುಜರಾತ್‌ನ ಗಿರ್ ಅರಣ್ಯಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟದಲ್ಲಿ ತೊಡಗಿದ್ದ ಪರಿಸರವಾದಿ ಅಮಿತ್ ಜೆಟ್ವಾ ಅವರನ್ನು ಗುಜರಾತ್ ಹೈಕೋರ್ಟ್ ಮುಂಭಾಗದಲ್ಲಿಯೇ ಗುಂಡಿಟ್ಟು ಕೊಲ್ಲಲಾಗಿತ್ತು.
ಪುಣೆ ಸಮೀಪದ ತಾಲೆಗಾಂವ್‌ನಲ್ಲಿನ ದಕ್ಷಿಣ ಕನ್ನಡ ಮೂಲದ ಸತೀಶ್ ಶೆಟ್ಟಿ, ಮಹಾರಾಷ್ಟ್ರದ ದತ್ತಾತ್ರೇಯ ಪಾಟೀಲ್, ಔರಂಗಾಬಾದ್‌ನ ವಿಠ್ಠಲ್ ಗೀತೆ, ಆಂಧ್ರಪ್ರದೇಶದ ಸೋಲಾ ರಂಗರಾವ್....ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ಪರಿಸರ ನಾಶ ಮೊದಲಾದವುಗಳ ವಿರುದ್ಧ ಹೋರಾಟ ನಡೆಸಿ ಪ್ರಾಣ ಕಳೆದುಕೊಂಡವರ ಪಟ್ಟಿ ದೊಡ್ಡದಿದೆ.
ಇವರ‌್ಯಾರೂ ಬೀದಿಗಿಳಿದು ತಾವು ದೇಶಪ್ರೇಮಿಗಳೆಂದು ಪ್ರದರ್ಶಿಸಿಕೊಳ್ಳಲಿಲ್ಲ, ಅನಾಮಿಕರಾಗಿ ಅನ್ಯಾಯದ ವಿರುದ್ದ ಹೋರಾಟ ನಡೆಸಿದರು, ಅನಾಮಿಕರಾಗಿಯೇ ಮರೆಯಾಗಿ ಹೋದರು. ಟಿವಿ ಕ್ಯಾಮೆರಾ ಮುಂದೆ ಕೂಗಾಡುತ್ತಿರುವ ಭ್ರಷ್ಟಾಚಾರದ ವಿರುದ್ಧದ `ಉಗ್ರ ಹೋರಾಟಗಾರರನ್ನು~ ಕಂಡಾಗ ಇವರೆಲ್ಲ ನೆನಪಾಗುತ್ತಿದ್ದಾರೆ.

Monday, August 15, 2011

ಸದಾ ಆನಂದವಾಗಿರಲು ದಾರಿಗಳು ಬಹಳ ಇಲ್ಲ

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ವಿ.ಸದಾನಂದ ಗೌಡರದ್ದು ಒಂದು ರೀತಿಯಲ್ಲಿ ಸುಲಭದ ಕೆಲಸ, ಇನ್ನೊಂದು ರೀತಿಯಲ್ಲಿ ಕಷ್ಟದ್ದು. ಒಬ್ಬ ಕಳಂಕರಹಿತ ಮತ್ತು ದಕ್ಷ ಮುಖ್ಯಮಂತ್ರಿಯ ಉತ್ತರಾಧಿಕಾರಿಯಾಗಿ ಬಂದಾಗ ಹಿಂದಿನವರನ್ನು ಮೀರಿಸಿ ಜನಪ್ರಿಯತೆ ಗಳಿಸುವುದು ದೊಡ್ಡ ಸವಾಲು.
ಅದಕ್ಕಾಗಿ ಅವರೆಡೂ ಮೌಲ್ಯಗಳ ವಿಷಯದಲ್ಲಿ ಹೊಸಬರು ಒಂದು ತೂಕ ಹೆಚ್ಚಿರಬೇಕಾಗುತ್ತದೆ. ಇಲ್ಲದಿದ್ದರೆ ಸೋಲು ನಿಶ್ಚಿತ. ಅಧಿಕಾರಾರೂಢ ಭ್ರಷ್ಟ ಜನತಾ ಪಕ್ಷವನ್ನು ಸೋಲಿಸಿ ಅಧಿಕಾರಕ್ಕೆ ಬಂದ ವೀರೇಂದ್ರ ಪಾಟೀಲ್ ಅವರ ಆಡಳಿತದ ಕಿರು ಅವಧಿ ಆರೋಪಮುಕ್ತ ನಡವಳಿಕೆ ಮತ್ತು ದಕ್ಷ ಆಡಳಿತದಿಂದ ಜನಮನ ಸೆಳೆದಿತ್ತು.
ಆ ಸಾಧನೆಯ ಬಲ ಮಾತ್ರವಲ್ಲ, ಜನಪ್ರಿಯತೆಯ ತುತ್ತತುದಿಯಲ್ಲಿರುವಾಗಲೇ ಕಿತ್ತು ಹಾಕಿದ್ದರಿಂದ ಜನರ ಅನುಕಂಪ ಕೂಡಾ ಪಾಟೀಲರ ಕಡೆ ಇತ್ತು. ಇದನ್ನು ಮೀರಿ ಸರ್ಕಾರದ ವರ್ಚಸ್ಸನ್ನು ಬೆಳೆಸಬೇಕಾದ ಸವಾಲು ಹೊತ್ತು ಬಂದ ಎಸ್.ಬಂಗಾರಪ್ಪ ಪ್ರಾರಂಭದಿಂದಲೇ ಎಡವಿದರು.
ಭಿನ್ನಮತ ಮತ್ತು ಭ್ರಷ್ಟಾಚಾರದ ಆರೋಪಗಳಿಂದಾಗಿ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು. ಆ ಸವಾಲುಗಳು ಸದಾನಂದ ಗೌಡರ ಮುಂದೆ ಇಲ್ಲ.
ಇದಕ್ಕೆ ವಿರುದ್ಧವಾಗಿ, ಕಳಂಕಿತ ಮುಖ್ಯಮಂತ್ರಿಯ ಉತ್ತರಾಧಿಕಾರಿಯಾಗಿ ಬಂದವರಿಗೆ ಕೆಲವು ಅನುಕೂಲತೆಗಳಿವೆ.
ಅವರು ಘನವಾದ ಸಾಧನೆಗಳನ್ನು ಮಾಡಬೇಕಾಗಿಲ್ಲ, ಭ್ರಷ್ಟರಾಗದೆ ತಮ್ಮ ಪಾಡಿಗೆ ತಾವು ಕೆಲಸ ಮಾಡಿಕೊಂಡು ನಗುನಗುತ್ತಾ ಇದ್ದರೂ ಜನಪ್ರಿಯನಾಗುವ ಸಾಧ್ಯತೆ ಇದೆ. ಈ ದೃಷ್ಟಿಯಿಂದ ಸದಾನಂದ ಗೌಡರ ಕೆಲಸ ಸುಲಭ.
ಮುಖ್ಯಮಂತ್ರಿಯಾಗಿ ಆರ್.ಗುಂಡೂರಾವ್ ನಡೆಸಿದ ದುರಾಡಳಿತದಿಂದ ಬೇಸತ್ತು ಹೋಗಿದ್ದ ಜನತೆಗೆ ಚುನಾವಣಾ ಪ್ರಚಾರದ ದಿನಗಳಲ್ಲಿ ಅಜ್ಞಾತರಾಗಿದ್ದು ದಿಢೀರನೇ ರಂಗಪ್ರವೇಶ ಮಾಡಿದ್ದ ರಾಮಕೃಷ್ಣ ಹೆಗಡೆ ಪರಮಾತ್ಮನ ಇನ್ನೊಂದು ಅವತಾರದಂತೆ ಕಂಡಿದ್ದರು.
ಮೊದಲ ಎರಡು ವರ್ಷಗಳ ಅವಧಿಯಲ್ಲಿ ಹೆಗಡೆ ಎಷ್ಟೊಂದು ಜನಪ್ರಿಯರಾಗಿದ್ದರೆಂದರೆ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ರಾಜೀನಾಮೆ ನೀಡಿ ಮರಳಿ ಚುನಾವಣೆ ಎದುರಿಸಿದಾಗ ರಾಜ್ಯದ ಜನ `ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವೋ ಎಂಬಂತೆ~ ಭಾರಿ ಬಹುಮತದಿಂದ ಅವರನ್ನು ಮರಳಿ ಅಧಿಕಾರಕ್ಕೆ ತಂದರು (ಎರಡನೇ ಅವಧಿಯ ಕತೆ ಬೇರೆ).
ಆದರೆ ಈ ಅನುಕೂಲತೆ ಇರುವುದು ವಿರೋಧಿ ರಾಜಕೀಯ ಪಕ್ಷಕ್ಕೆ ಸೇರಿದ ಭ್ರಷ್ಟ ಮುಖ್ಯಮಂತ್ರಿಯ ನಿರ್ಗಮನದ ನಂತರ ಅಧಿಕಾರಕ್ಕೆ ಬಂದಾಗ ಮಾತ್ರ. ಜನರಿನ್ನೂ ಹಳೆಯ ಆಡಳಿತದ ದುಃಸ್ವಪ್ನದಿಂದ ಹೊರಬಾರದಿರುವುದರಿಂದ ಹೊಸ ಮುಖ್ಯಮಂತ್ರಿ ತೋರಿಸುವ ಕನಸುಗಳಲ್ಲಿ ಅವರು ಸುಲಭದಲ್ಲಿ ತೇಲಿ ಹೋಗುತ್ತಾರೆ.
ಜನರನ್ನು ಕಾಡುತ್ತಿರುವ ಎಲ್ಲ ಅನಿಷ್ಟಗಳಿಗೂ (ಖಾಲಿ ಖಜಾನೆ, ಅನಭಿವೃದ್ದಿ, ಹಳಿ ತಪ್ಪಿದ ಆಡಳಿತ ಇತ್ಯಾದಿ) ಹಿಂದಿನ ಸರ್ಕಾರವೇ ಕಾರಣ ಎಂದು ಹೊಸಬರು ಉಪಾಯವಾಗಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಹುದು.

ಪ್ರಾರಂಭದ ದಿನಗಳಲ್ಲಿ ಜನ ಕೂಡಾ ಹೊಸ ಸರ್ಕಾರಕ್ಕೊಂದು `ಮಧುಚಂದ್ರ~ದ ಅವಧಿಯನ್ನು ಉದಾರವಾಗಿ ನೀಡುತ್ತಾರೆ. ವಿರೋಧಪಕ್ಷಗಳ ಆರೋಪಗಳು ಎದುರಾದರೂ ಹೊಸ ಮುಖ್ಯಮಂತ್ರಿಗಳು ಬಹಳ ಸುಲಭದಲ್ಲಿ `ನಿಮ್ಮ ಕಾಲದಲ್ಲಿ ನಡೆದಿಲ್ವೆ? ನೀವೇನು ಸಾಚಾಗಳೇ?~ ಎಂದು ಉಡಾಫೆಯಿಂದ ಪ್ರಶ್ನಿಸುತ್ತಾ ಒಂದಷ್ಟು ದಿನ ಕಾಲ ತಳ್ಳಬಹುದು.

ಈ ಅನುಕೂಲತೆ ತಮ್ಮದೇ ಪಕ್ಷದ ಮುಖ್ಯಮಂತ್ರಿ ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ಅಧಿಕಾರ ಕಳೆದುಕೊಂಡ ಸಂದರ್ಭದಲ್ಲಿ ಆ ಸ್ಥಾನಕ್ಕೆ ಬರುವವರಿಗೆ ಇರುವುದಿಲ್ಲ.
ಅವರು ಹಿಂದಿನ ಮುಖ್ಯಮಂತ್ರಿಗಳನ್ನು ಬಹಿರಂಗವಾಗಿ ದೂರುವಂತಿಲ್ಲ, ದೂರಿದರೆ ಆಕಾಶಕ್ಕೆ ಮುಖಮಾಡಿ ಉಗುಳಿದಂತೆ. ಅದನ್ನು ಮರೆತುಬಿಡುವ ಹಾಗೂ ಇಲ್ಲ, ಮರೆತರೂ ಹಿಂದಿನವರ ಪಾಪದ ಫಲ ಹಿಂಬಾಲಿಸಿಕೊಂಡು ಬರುತ್ತದೆ.
ಅದನ್ನು ಮೀರಿ ಎಚ್ಚರಿಕೆಯಿಂದ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗುತ್ತದೆ. ಈ ದೃಷ್ಟಿಯಿಂದ ಸದಾನಂದ ಗೌಡರದ್ದು ಕಷ್ಟದ ಕೆಲಸ.
ಅವರ ಕಷ್ಟಗಳನ್ನು ಇನ್ನಷ್ಟು ಹೆಚ್ಚಿಸಿರುವುದು ಬಿ.ಎಸ್.ಯಡಿಯೂರಪ್ಪ ಎಂಬ ಅಸುರಕ್ಷತೆಯಿಂದ ಬಳಲುತ್ತಿರುವ ಹಟಮಾರಿ ನಾಯಕ ಮತ್ತು ಪಕ್ಷದ ದುರ್ಬಲ ಹೈಕಮಾಂಡ್.
ಯಡಿಯೂರಪ್ಪನವರ ಬಹಳ ದೊಡ್ಡ ಸಮಸ್ಯೆಯೆಂದರೆ ತಾನು ಯಾಕೆ ಅಧಿಕಾರ ಕಳೆದುಕೊಳ್ಳಬೇಕಾಯಿತು ಎನ್ನುವ ಸರಳವಾದ ವಿಚಾರ ಈಗಲೂ ಅರ್ಥವಾಗದೆ ಇರುವುದು.
ತನ್ನ ಪದಚ್ಯುತಿಗೆ ಕಾರಣ ತನ್ನ ತಪ್ಪುಗಳಲ್ಲ, ವಿರೋಧಿಗಳ ಪಿತೂರಿ ಎಂದು ಅವರು ಬಲವಾಗಿ ನಂಬಿರುವುದು ಮಾತ್ರ ಅಲ್ಲ, ರಾಜ್ಯದ ಜನರೂ ಹಾಗೆಯೇ ನಂಬಿದ್ದಾರೆ ಎಂದು  ತಿಳಿದುಕೊಂಡಿರುವುದು.
ಇದರಿಂದಾಗಿ ತಾನು ಅಧಿಕಾರ ಕಳೆದುಕೊಂಡರೂ ಜನಪ್ರಿಯತೆ ಕಳೆದುಕೊಂಡಿಲ್ಲ ಎನ್ನುವ ವಿಶ್ವಾಸ ಅವರ ನಡೆ-ನುಡಿಯಲ್ಲಿ ವ್ಯಕ್ತವಾಗುತ್ತಿದೆ. ಇದು ಅವರ ಮುಗ್ಧತೆಯೋ, ಅಜ್ಞಾನವೋ ಗೊತ್ತಿಲ್ಲ.
ಆದರೆ ಮಾಜಿ ಮುಖ್ಯಮಂತ್ರಿಗಳ ಈ ಮನೋಭಾವ ಹಾಲಿ ಮುಖ್ಯಮಂತ್ರಿಗಳಿಗೆ ಸಮಸ್ಯೆಗಳನ್ನು ಸೃಷ್ಟಿಸಬಲ್ಲದು. ಸದಾನಂದ ಗೌಡರಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದ್ದಿರಬಹುದು, ಆದರೆ ಇಂದು ಅವರು ಆ ಸ್ಥಾನದಲ್ಲಿ ಕೂತಿದ್ದರೆ ಅದು ಅರ್ಹತೆಯ ಬಲದಿಂದ ಅಲ್ಲ, ಯಡಿಯೂರಪ್ಪನವರ ಬೆಂಬಲದ ಬಲದಿಂದ.
ಇದು ಯಡಿಯೂರಪ್ಪನವರಿಗಿಂತಲೂ ಚೆನ್ನಾಗಿ ಗೌಡರಿಗೆ ಗೊತ್ತಿದೆ. ಆದ್ದರಿಂದ ಮುಖ್ಯಮಂತ್ರಿಗಳು ತನ್ನ ಕೈತಪ್ಪಿಹೋಗುತ್ತಿದ್ದಾರೆ ಎಂದು ಒಂದು ಕ್ಷಣ  ಅನಿಸಿದರೂ ಯಡಿಯೂರಪ್ಪನವರು ಸುಮ್ಮನಿರುವವರಲ್ಲ.
ತನ್ನ ರಾಜಕೀಯ ಜೀವನದ ಬಹುಭಾಗವನ್ನು ವಿರೋಧ ಪಕ್ಷದ ನಾಯಕರಾಗಿಯೇ ಕಳೆದಿರುವ ಯಡಿಯೂರಪ್ಪನವರು ಕಟ್ಟುವುದಕ್ಕಿಂತಲೂ ಕೆಡವುದನ್ನು ಅನಾಯಾಸವಾಗಿ ಮಾಡಬಲ್ಲರು. ಇಂತಹವರು ಸರ್ಕಾರದ ಒಳಗಿರುವುದಕ್ಕಿಂತ ಹೊರಗಿದ್ದರೆ ಹೆಚ್ಚು ಅಪಾಯಕಾರಿ, ಯಾಕೆಂದರೆ ಹೊರಗಿದ್ದು ಅವರು ಕಳೆದುಕೊಳ್ಳುವುದು ಏನೂ ಇಲ್ಲ.
ಇಂತಹವರನ್ನು ಪಕ್ಷದ ಬಲಿಷ್ಠ ಹೈಕಮಾಂಡ್ ಮಾತ್ರ ನಿಯಂತ್ರಿಸಲು ಸಾಧ್ಯ. ವೀರೇಂದ್ರ ಪಾಟೀಲ್ ಅವರನ್ನು ಕಿತ್ತೊಗೆದಾಗ ಬಂಗಾರಪ್ಪನವರ ಬೆಂಬಲಕ್ಕೆ ರಾಜೀವ್‌ಗಾಂಧಿ ನೇತೃತ್ವದ ಶಕ್ತಿಶಾಲಿ ಕಾಂಗ್ರೆಸ್ ಹೈಕಮಾಂಡ್ ಇತ್ತು.
ಆದ್ದರಿಂದ ತಕ್ಷಣದಲ್ಲಿ ಅನಾಹುತಗಳೇನೂ ಆಗಿರಲಿಲ್ಲ. ಮನಮೋಹನ್‌ಸಿಂಗ್ ಅವರು ಕಳೆದ ಏಳು ವರ್ಷಗಳಿಂದ ಪ್ರಧಾನಿಯಾಗಿದ್ದರೆ ಅದಕ್ಕೆ ಸೋನಿಯಾಗಾಂಧಿ ನೇತೃತ್ವದ ಹೈಕಮಾಂಡ್ ಬೆಂಬಲ ಕಾರಣ.

ಅದು ಇಲ್ಲದೆ ಇದ್ದಿದ್ದರೆ ಪ್ರಣವ್ ಮುಖರ್ಜಿ, ಚಿದಂಬರಂ ಮೊದಲಾದ ಘಟಾನುಘಟಿಗಳು ಉಳಿದವರ ಜತೆ ಸೇರಿ ಬಡಪಾಯಿ ಮನಮೋಹನ್‌ಸಿಂಗ್ ಅವರನ್ನು ಎಂದೋ ಕುರ್ಚಿ ಬಿಟ್ಟು ಓಡಿಸುತ್ತಿದ್ದರು.

ರಾಜೀನಾಮೆ ನೀಡಬೇಕಾಗಿ ಬಂದ ಉಮಾಭಾರತಿ ಮರಳಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಬಯಸಿದಾಗ ಬಿಜೆಪಿ ಹೈಕಮಾಂಡ್ ಅದಕ್ಕೆ ಅವಕಾಶ ನೀಡದೆ ಬಾಬುಲಾಲ್ ಗೌರ್ ಅವರನ್ನೇ ಮುಂದುವರಿಸಿತ್ತು.
ಅದರ ನಂತರ ಶಿವರಾಜ್‌ಸಿಂಗ್ ಚೌಹಾಣ್ ಎಂಬ ಒಂದು ಕಾಲದ ಉಮಾಭಾರತಿಯವರ ಶಿಷ್ಯನನ್ನೇ ಆ ಸ್ಥಾನದಲ್ಲಿ ಕೂರಿಸಿದ್ದು ಮಾತ್ರವಲ್ಲ, ಅವರ ನೇತೃತ್ವದಲ್ಲಿ ಚುನಾವಣೆಯನ್ನೂ ಎದುರಿಸಿತು.
ಉಮಾಭಾರತಿಯವರ ಜನಪ್ರಿಯತೆ ಯಡಿಯೂರಪ್ಪನವರಿಗಿಂತ ಕಡಿಮೆ ಏನಿರಲಿಲ್ಲ. ಆದರೆ ಗುರು ಮತ್ತು ಶಿಷ್ಯನ ನಡುವೆ ನಡೆದ ಚುನಾವಣಾ ಸಮರದಲ್ಲಿ ಶಿಷ್ಯನೇ ಗೆದ್ದುಬಿಟ್ಟರು. ಇದಕ್ಕೆ ಅವರ ಬೆನ್ನಹಿಂದೆ ದೃಢವಾಗಿ ನಿಂತ ಬಿಜೆಪಿ ಹೈಕಮಾಂಡ್ ಕಾರಣ.
ಈ ಪರಿಸ್ಥಿತಿಯಲ್ಲಿ ಆತ್ಮರಕ್ಷಣೆಗಾಗಿ ಸದಾನಂದ ಗೌಡರ ಬಳಿ ಬಹಳ ಆಯ್ಕೆಗಳಿಲ್ಲ, ಇರುವುದೇ ಎರಡು. ಒಂದೋ ಯಡಿಯೂರಪ್ಪನವರಿಗೆ ಸಂಪೂರ್ಣ ಶರಣಾಗತಿ ಇಲ್ಲವೇ ಸ್ವತಂತ್ರವಾಗಿ ಕಾರ‌್ಯನಿರ್ವಹಣೆ. ಇವೆರಡೂ ಅರ್ಧಅರ್ಧ ಮಾಡುವ ಕೆಲಸಗಳಲ್ಲ. ಎರಡು ದೋಣಿಗಳಲ್ಲಿ ಕಾಲಿಡುವವರು ನೀರಲ್ಲಿ ಮುಳುಗುವ ಸಾಧ್ಯತೆಯೇ ಹೆಚ್ಚು.

ಶರಣಾಗತಿ ಎಂದರೆ ಮುಖ್ಯಮಂತ್ರಿಯಾಗಿ ಕೈಯಲ್ಲಿರಬೇಕಾದ ರಾಜಕೀಯ ಅಧಿಕಾರವನ್ನು ಬಿಟ್ಟುಕೊಡುವುದು. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ನಾಯಕನಾಗದವನು ಆಡಳಿತದ ಮುಖ್ಯಸ್ಥನಾಗಿ ಯಶಸ್ಸು ಕಾಣುವುದು ಕಷ್ಟ.
ಭ್ರಷ್ಟಾಚಾರದ ಆರೋಪಗಳಿಂದಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಜೆ.ಜಯಲಲಿತಾ ಮುಖ್ಯಮಂತ್ರಿಯಾಗಿ ನೇಮಕಗೊಂಡದ್ದನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದಾಗ ಆರು ತಿಂಗಳ ಅವಧಿಗೆ ಒ. ಪನ್ನೀರಸೆಲ್ವಂ ಮುಖ್ಯಮಂತ್ರಿಗಳಾಗಿದ್ದರು. ರಾಜಕೀಯದ ಯಾವ ಅಧಿಕಾರವೂ ಅವರಿಗೆ ಇರಲಿಲ್ಲ. ಅವರು ಜಯಲಲಿತಾ ಕೂರುತ್ತಿದ್ದ ಕುರ್ಚಿಯಲ್ಲಿಯೂ ಕೂತಿರಲಿಲ್ಲ.
ಬಿಕ್ಕಟ್ಟಿನ ಸಂದರ್ಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾದ ಶಿವರಾಜ್‌ಸಿಂಗ್ ಚೌಹಾಣ್, ಜನಪ್ರಿಯ ನಾಯಕಿ ಉಮಾಭಾರತಿ ಅವರನ್ನು ಎದುರು ಹಾಕಿಕೊಂಡು ಕಳೆದ ಆರುವರ್ಷಗಳಿಂದ ಅಧಿಕಾರದಲ್ಲಿ ಮುಂದುವರಿದಿದ್ದಾರೆ.
ಇತಿಹಾಸದ ಪುಟಗಳಲ್ಲಿ ಪನ್ನೀರಸೆಲ್ವಂ ಮತ್ತು ಶಿವರಾಜ್‌ಸಿಂಗ್ ಚೌಹಾಣ್ ಇಬ್ಬರ ಹೆಸರೂ ಇದೆ. ಇವರಲ್ಲಿ ಯಾರ ಪಕ್ಕದಲ್ಲಿ ತಮ್ಮ ಹೆಸರು ಇರಬೇಕೆಂಬುದನ್ನು ಸದಾನಂದಗೌಡರು ನಿರ್ಧರಿಸಬೇಕಾಗಿದೆ.
 ಇಷ್ಟೆಲ್ಲ ಕಸರತ್ತು ನಡೆಸಿದ ನಂತರವೂ ಸದಾನಂದ ಗೌಡರು ಇನ್ನುಳಿದ ಇಪ್ಪತ್ತೆರಡು ತಿಂಗಳುಗಳನ್ನು ಪೂರ್ಣಗೊಳಿಸಬಹುದೇ? ಈ ಪ್ರಶ್ನೆಗೆ ಉತ್ತರ ನೀಡುವುದು ಕಷ್ಟ. ಆದರೆ ಇಪ್ಪತ್ತೆರಡು ತಿಂಗಳು ಈ ಸರ್ಕಾರ ಬಾಳಿದರೆ ಅದರ ನಂತರ ಏನಾಗಬಹುದೆಂಬುದನ್ನು ಸುಲಭದಲ್ಲಿ ಊಹಿಸಬಹುದು.
ಸದಾನಂದ ಗೌಡರು ಇಪ್ಪತ್ತೆರಡು ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿದು ಅತ್ಯುತ್ತಮ ಆಡಳಿತವನ್ನೇ ನೀಡಿದರೆನ್ನಿ.
ಆಗಲೂ ಬಿಜೆಪಿ ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಲಾಗದು. ಚುನಾವಣೆ ಘೋಷಣೆಯಾದ ಕೂಡಲೇ ಬಿಜೆಪಿಯಲ್ಲಿ ಏನು ನಡೆಯಬಹುದೆಂಬುದನ್ನು ಈಗಲೇ ಹೇಳಿ ಬಿಡಬಹುದು, ಇದಕ್ಕೆ ಜ್ಯೋತಿಷಶಾಸ್ತ್ರವನ್ನು ಓದಬೇಕಾಗಿಲ್ಲ, ಯಡಿಯೂರಪ್ಪನವರನ್ನು ಅರ್ಥಮಾಡಿಕೊಂಡರೆ ಸಾಕು.
ಮೊದಲನೆಯದಾಗಿ ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಯಾವುದೇ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡು ದಿಢೀರನೇ ಒಂದು ಪ್ರಾದೇಶಿಕ ಪಕ್ಷವನ್ನು ಹುಟ್ಟುಹಾಕಬಹುದು. ಅದನ್ನು ಮಾಡದೆ ಇದ್ದರೆ ಚುನಾವಣೆ ಘೋಷಣೆಯಾದ ಕೂಡಲೇ  ಕನಿಷ್ಠ 150 ಮಂದಿ ತನ್ನ ಬೆಂಬಲಿಗರಿಗೆ ಪಕ್ಷದ ಟಿಕೆಟ್ ಕೇಳಬಹುದು.

ನಿರಾಕರಿಸಿದರೆ ಎಲ್ಲೆಲ್ಲಿ ತಾವೊಲ್ಲದ ಪಕ್ಷದ ಅಭ್ಯರ್ಥಿಗಳಿರುತ್ತಾರೋ ಅಲ್ಲೆಲ್ಲ ಬಂಡುಕೋರರನ್ನು ಕಣಕ್ಕಿಳಿಸಬಹದು. ಈ ಬಂಡುಕೋರರು ಗೆಲ್ಲದಿದ್ದರೂ ಅಧಿಕೃತ ಅಭ್ಯರ್ಥಿಗೆ ಹೋಗಬೇಕಾಗಿರುವ 10-20 ಸಾವಿರ ಮತಗಳನ್ನು ತಿಂದುಹಾಕುತ್ತಾರೆ.
1994ರ ವಿಧಾನಸಭಾ ಚುನಾವಣೆಯಲ್ಲಿ  ಯಡಿಯೂರಪ್ಪನವರ ಜಿಲ್ಲೆಯವರೇ ಆಗಿರುವ ಎಸ್. ಬಂಗಾರಪ್ಪನವರ ಬಂಡಾಯದಿಂದಾಗಿ ಕಾಂಗ್ರೆಸ್ ಯಾವ ರೀತಿ ಸೋಲು ಅನುಭವಿಸಿತೋ ಅದೇ ಗತಿ ಬಿಜೆಪಿಗೆ ಬರಬಹುದು (ಎಸ್.ಬಂಗಾರಪ್ಪನವರ ಕೆಸಿಪಿ ಗೆದ್ದದ್ದು ಹತ್ತೇ ಸ್ಥಾನಗಳಾದರೂ ಗಳಿಸಿದ್ದ ಮತಪ್ರಮಾಣ ಶೇ 7.31. ಕಾಂಗ್ರೆಸ್  ಶೇ 27.31ರಷ್ಟು ಮತಗಳಿಸಿತ್ತು. 
ಜನತಾ ಪಕ್ಷ ಗಳಿಸಿದ್ದ ಮತ ಪ್ರಮಾಣ ಶೇ 33.54 ಮಾತ್ರ. ಇದು ಕಾಂಗ್ರೆಸ್ ಮತ್ತು ಕೆಸಿಪಿಯ ಒಟ್ಟು ಮತ ಪ್ರಮಾಣಕ್ಕಿಂತ ಶೇ 0.98ರಷ್ಟು ಕಡಿಮೆ. ಅಂದರೆ ಬಂಗಾರಪ್ಪ ಕಾಂಗ್ರೆಸ್ ಜತೆಗಿದ್ದರೆ ಅದು ಸೋಲುತ್ತಿರಲಿಲ್ಲವೇನೋ?)
ಒಂದೊಮ್ಮೆ ಯಡಿಯೂರಪ್ಪನವರ ಒತ್ತಡಕ್ಕೆ ಹೈಕಮಾಂಡ್ ಮಣಿದು ಅವರು ಹೇಳಿದ 150 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆನ್ನಿ, ಆಗ ಅವರ ವಿರೋಧಿಗಳು ಸುಮ್ಮನಿರುತ್ತಾರಾ? ಅವರು ಅಲ್ಲಲ್ಲಿ ಬಂಡುಕೋರರನ್ನು ಕಣಕ್ಕಿಳಿಸುತ್ತಾರೆ. ಅವರೂ 10-20 ಸಾವಿರ ಮತಗಳನ್ನು ಪಡೆದು ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಗೆ ಕಾರಣರಾಗುತ್ತಾರೆ.
ಯಾವ ದೃಷ್ಟಿಯಿಂದ ನೋಡಿದರೂ ಬಿಜೆಪಿಯ ಮುಂದಿರುವುದು ಸೋಲಿನ ಹಾದಿಯೇ ಹೊರತಾಗಿ ಗೆಲುವಿನದ್ದಲ್ಲ. ಬಿಜೆಪಿಯ ಗೆಲುವಿಗೆ ಇರುವ ಒಂದೇ ದಾರಿಯೆಂದರೆ ಯಡಿಯೂರಪ್ಪನವರಿಗೆ ಇದ್ದಕ್ಕಿದ್ದ ಹಾಗೆ ಜ್ಞಾನೋದಯವಾಗಿ `ನಾನು ಯಾರಿಗೂ ಟಿಕೆಟ್ ಕೇಳುವುದಿಲ್ಲ, ಗೆದ್ದು ಬಂದರೆ ಅಧಿಕಾರವನ್ನೂ ಕೇಳುವುದಿಲ್ಲ.
ಪಕ್ಷದ ನಿಷ್ಠಾವಂತ ಕಾರ‌್ಯಕರ್ತನಾಗಿ ಕೆಲಸ ಮಾಡುತ್ತೇನೆ~ ಎಂದು ಘೋಷಿಸಿ ಪ್ರಾಮಾಣಿಕವಾಗಿ ಮಾತಿಗೆ ತಕ್ಕಂತೆ ನಡೆದುಕೊಳ್ಳುವುದು. ಇಷ್ಟು ವರ್ಷಗಳ ಕಾಲ ಯಡಿಯೂರಪ್ಪನವರನ್ನು ನೋಡಿದವರಿಗಾದರೂ ಅವರು ಈ ರೀತಿ ಬದಲಾಗಬಹುದು ಎಂದು ಅನಿಸುತ್ತಾ?

Monday, August 8, 2011

ದುರ್ಬಲ ನಾಯಕತ್ವದ ಅಸಹಾಯಕ ಬಿಜೆಪಿ

ಚುನಾವಣಾ ಸೋಲು ರಾಜಕೀಯ ಪಕ್ಷಗಳಿಗೆ ಹೊಸದಲ್ಲ, ಅವಮಾನವೂ ಅಲ್ಲ. ಕುಸಿದುಬಿದ್ದ ಗೆಲುವಿನ ಕೋಟೆಯ ಇಟ್ಟಿಗೆಗಳನ್ನು ಇಟ್ಟುಕೊಂಡೇ ರಾಜಕಾರಣಿಗಳು ಗೆಲುವಿನ ಮೆಟ್ಟಿಲುಗಳನ್ನು ಕಟ್ಟಲು ಪ್ರಯತ್ನಿಸುತ್ತಾರೆ.

ಎಷ್ಟೋ ಸಂದರ್ಭಗಳಲ್ಲಿ ಸೋಲಿನ ನಂತರ ಉಕ್ಕಿಬರುವ ಮತದಾರರ ಅನುಕಂಪವೇ ಅವರನ್ನು ಗೆಲುವಿನ ಕಡೆ ಕೈಹಿಡಿದು ನಡೆಸಿಕೊಂಡು ಹೋಗುವುದುಂಟು. ಆದರೆ ನೈತಿಕವಾಗಿ ರಾಜಕೀಯ ಪಕ್ಷಗಳು ಅನುಭವಿಸುವ ಸೋಲು ಅವಮಾನದಿಂದ ಮುಖ ಮುಚ್ಚಿಕೊಳ್ಳುವಂತೆ ಮಾಡುವುದು ಮಾತ್ರವಲ್ಲ, ಅದರಿಂದ ಚೇತರಿಸಿಕೊಳ್ಳಲು ಬಹಳ ಕಾಲ ಬೇಕಾಗುತ್ತದೆ.

ಯಾಕೆಂದರೆ, ಆಗ ಜನರಿಂದ ವ್ಯಕ್ತವಾಗುವುದು ಅನುಕಂಪ ಅಲ್ಲ, ತಿರಸ್ಕಾರ. ಹತ್ತು ವರ್ಷಗಳ ಹಿಂದೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಅವರು ಲಂಚ ಪಡೆಯುತ್ತಿರುವುದು ಟಿವಿ ಪರದೆಗಳಲ್ಲಿ ಬಿತ್ತರಗೊಂಡಾಗ ಭಾರತೀಯ ಜನತಾ ಪಕ್ಷ ನೈತಿಕವಾಗಿ ಕುಸಿದುಹೋಗಿತ್ತು.
ಆ ಪಕ್ಷದ ನಾಯಕರು ತಮ್ಮನ್ನು ಸಮರ್ಥಿಸಿಕೊಳ್ಳಲು ಮಾಧ್ಯಮಗಳ ಮುಂದೆ ಪರದಾಡುತ್ತಿದ್ದರು. ಆದರೆ ಆ ಕಾಲದಲ್ಲಿ ಕೈಯ್ಯಲ್ಲಿದ್ದ ಅಧಿಕಾರದ ಬಲ ಮತ್ತು ಪಕ್ಷದಲ್ಲಿದ್ದ ಎ.ಬಿ.ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿಯವರಂತಹ ಹಿರಿಯ ನಾಯಕರು ಆ ಕುಸಿತವನ್ನು ಒಂದು ಹಂತಕ್ಕೆ ತಡೆದು ನಿಲ್ಲಿಸಿ ಪಕ್ಷದ ಮುಖ ಉಳಿಸಿದ್ದರು. ಆದರೆ ಈಗ ?
ಭಾರತೀಯ ಜನತಾ ಪಕ್ಷ ಅಸ್ತಿತ್ವಕ್ಕೆ ಬಂದ ನಂತರದ ಮೂರು ದಶಕಗಳಲ್ಲಿ ಹಲವಾರು ಚುನಾವಣಾ ಸೋಲುಗಳನ್ನು ಅನುಭವಿಸಿದೆ. ಕಲ್ಯಾಣ್‌ಸಿಂಗ್ ಅವರಿಂದ ಹಿಡಿದು ಮದನ್‌ಲಾಲ್ ಖುರಾನಾ, ಬಾಬುಲಾಲ್ ಮರಂಡಿ, ಉಮಾಭಾರತಿ ವರೆಗೆ ಹಲವರ ಬಂಡಾಯವನ್ನು ಎದುರಿಸಿದೆ.

ಆದರೆ ಈಗಿನಷ್ಟು ದುರ್ಬಲ ಮತ್ತು ಅಸಹಾಯಕ ಸ್ಥಿತಿಯಲ್ಲಿ ಅದು ಎಂದೂ ಕಾಣಿಸಿಕೊಂಡಿರಲಿಲ್ಲ. ಪಕ್ಷಕ್ಕೆ ಉಗ್ರಸ್ವರೂಪದ ರಾಜಕೀಯ ಮುಖವನ್ನು ನೀಡಿದ್ದ  ಎಲ್.ಕೆ.ಅಡ್ವಾಣಿ  ತಮ್ಮ ಸಂಯಮದ ಮಾತುಗಳಿಂದ ಎಲ್ಲರ ಅಭಿಮಾನಕ್ಕೆ ಪಾತ್ರರಾದವರು.

ತಮ್ಮ ಹೋರಾಟದ ದಿನಗಳಲ್ಲಿಯೂ ಕಟುವಾಗಿ ಮಾತನಾಡಿದ್ದು ಕಡಿಮೆ. ಇಂತಹ ಅಡ್ವಾಣಿಯವರು ಹತಾಶರಾಗಿ `ನಮ್ಮಲ್ಲಿ  ಡಕಾಯಿತರು, ಕಿಸೆಗಳ್ಳರು ಇದ್ದಾರೆ~ ಎಂದು ಹೇಳುವ ಮಟ್ಟಕ್ಕೆ ಹೋಗುವುದಾದರೆ ಪಕ್ಷ ತಲುಪಿರುವ ನೈತಿಕ ಅಧಃಪತನದ ಆಳವನ್ನು ಊಹಿಸಿಕೊಳ್ಳಬಹುದು. ರಾಜಕೀಯ ಪಕ್ಷದ ಅಸಹಾಯಕತೆಗೆ ಅದರ ದುರ್ಬಲ ನಾಯಕತ್ವ ಕಾರಣವಾಗುತ್ತದೆ. ಕರ್ನಾಟಕದಲ್ಲಿ ಬಯಲಾಗಿದ್ದು ಇದೇ ದೌರ್ಬಲ್ಯ.
ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಪ್ರಶ್ನೆ ಎದುರಾದಾಗ  ಹೈಕಮಾಂಡ್ ಬಹಳ ಜಾಣತನದಿಂದ ರಹಸ್ಯ ಮತದಾನದ ಪ್ರಸ್ತಾವ ಮುಂದಿಟ್ಟಿತು. ದೆಹಲಿಯಿಂದ ಲಕೋಟೆ ಮೂಲಕ ಬರುವ ಕಾಂಗ್ರೆಸ್ ಮುಖ್ಯಮಂತ್ರಿಗಳಿಗಿಂತ ಇದು ಹೆಚ್ಚು ಪ್ರಜಾಸತ್ತಾತ್ಮಕವಾದುದು ಎನ್ನುವುದರಲ್ಲಿ ಅನುಮಾನ ಇಲ್ಲ.

ಆದರೆ ಬಿಜೆಪಿ ಈ ಉದ್ದೇಶದಿಂದ ರಹಸ್ಯ ಮತದಾನ ನಡೆಸಿದ್ದೇ? ಅಂತಹ ಉದ್ದೇಶ ಇದ್ದಿದ್ದರೆ ಅದನ್ನು ಹಿಂದೆ ಯಾಕೆ ನಡೆಸಿರಲಿಲ್ಲ? ಈದ್ಗಾ ವಿವಾದದಲ್ಲಿ ಸಿಲುಕಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮಾಭಾರತಿ ಅವರ ವಿರುದ್ದದ ಮೊಕದ್ದಮೆಯನ್ನು ಕರ್ನಾಟಕ ಸರ್ಕಾರ ಹಿಂದೆಗೆದುಕೊಂಡ ನಂತರ ಅವರನ್ನು ಹೈಕೋರ್ಟ್ ದೋಷಮುಕ್ತಗೊಳಿಸಿತ್ತು.
ಆದರೆ ಬಿಜೆಪಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲಿಲ್ಲ. ಬಹುಸಂಖ್ಯೆಯ ಶಾಸಕರು ಉಮಾಭಾರತಿ ಪರ ಇದ್ದರೂ ಬಿಜೆಪಿ ಹೈಕಮಾಂಡ್ ಬಾಬುಲಾಲ್ ಗೌರ್ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಿತು. ಅಲ್ಲೂ ರಹಸ್ಯ ಮತದಾನ ನಡೆಸಬಹುದಿತ್ತಲ್ಲ?

ರಹಸ್ಯ ಮತದಾನಕ್ಕೆ ನಿಜವಾದ ಕಾರಣ ದುರ್ಬಲ ನಾಯಕತ್ವದ ಅಸಹಾಯಕತೆ ಕಾರಣ ಹೊರತು ಆಂತರಿಕ ಪ್ರಜಾಪ್ರಭುತ್ವದ ಮೇಲಿನ ಬದ್ಧತೆ ಅಲ್ಲ. ಈ ದುರ್ಬಲ ನಾಯಕತ್ವದ ಹುಟ್ಟಿಗೆ ಯಾರು ಕಾರಣರೆಂದು ಹುಡುಕುತ್ತಾ ಹೋದರೆ ಎದುರಾಗುವುದು ನಾಗಪುರದ ಆರ್‌ಎಸ್‌ಎಸ್ ಕೇಂದ್ರ ಕಚೇರಿ.

ಸಂವಿಧಾನದತ್ತವಾದ ಅಧಿಕಾರ ಇಲ್ಲದ, ರಾಜಕೀಯ ಸ್ವರೂಪದ ಯಾವ ಬಾಧ್ಯತೆಯೂ ಇಲ್ಲದ ಆರ್‌ಎಸ್‌ಎಸ್ ಕೆಲಸ ಏನಿದ್ದರೂ ತೆರೆಯ ಮರೆಯಲ್ಲಿ. ಆದ್ದರಿಂದಲೇ ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಅದು ವಹಿಸುವ ಪಾತ್ರ ಚರ್ಚೆಗೆ ಬರುವುದೇ ಇಲ್ಲ.
ಆರು ವರ್ಷಗಳ ಹಿಂದೆ ಆರ್‌ಎಸ್‌ಎಸ್ ಸರಸಂಘ ಚಾಲಕ ಕೆ.ಎಸ್.ಸುದರ್ಶನ್ ಅವರು ಇದ್ದಕ್ಕಿದ್ದಂತೆ ಟಿವಿ ಚಾನೆಲ್‌ಗೆ ಸಂದರ್ಶನ ನೀಡಿ ಬಿಜೆಪಿಯ ಎರಡು ಹಿರಿತಲೆಗಳಾದ ವಾಜಪೇಯಿ ಮತ್ತು ಅಡ್ವಾಣಿಯವರು ರಾಜಕೀಯದಿಂದ ನಿವೃತ್ತಿ ಆಗಬೇಕೆಂದು ಫರ್ಮಾನು ಹೊರಡಿಸಿದ್ದರು.ಅದು ಗುರುಸ್ಥಾನದಲ್ಲಿರುವ ಆರ್‌ಎಸ್‌ಎಸ್‌ಗೆ 80 ಮತ್ತು ಶಿಷ್ಯನ ಸ್ಥಾನದಲ್ಲಿರುವ ಬಿಜೆಪಿಗೆ 25 ತುಂಬಿದ ವರ್ಷ.
ದ್ರೋಣಾಚಾರ್ಯರನ್ನು ಹೊರತು ಪಡಿಸಿದರೆ ಇಂತಹ ದುಬಾರಿ `ಗುರುದಕ್ಷಿಣೆ~ಯನ್ನು ಬೇರೆ ಯಾವ ಗುರುವೂ ಕೇಳಿರಲಾರರು.  ಸಮರ್ಥರಾದ ಕಿರಿಯರಿಗೆ ನಾಯಕತ್ವ ಹಸ್ತಾಂತರಿಸುವ ಉದ್ದೇಶದಿಂದ ವಯಸ್ಸಿನ ಭಾರದಿಂದ ಬಾಗಿದ ಹಿರಿಯರನ್ನು ನಿವೃತ್ತಿಯಾಗಲು ಹೇಳಿದ್ದರೆ ಅದೊಂದು ಸಹಜ ಪ್ರಕ್ರಿಯೆ ಆಗುತ್ತಿತ್ತು.

ವಾಜಪೇಯಿ ಆರೋಗ್ಯ ಆಗಲೇ ಕೈಕೊಡುತ್ತಿದ್ದುದರಿಂದ ಅವರು ನಿವೃತ್ತಿ ಜೀವನದ ಕಡೆ ಮೆಲ್ಲಗೆ ಹೆಜ್ಜೆ ಹಾಕುತ್ತಿದ್ದರು ನಿಜ, ಆದರೆ ಅಡ್ವಾಣಿ? ತನ್ನ ವಯಸ್ಸಿನ ಉಳಿದೆಲ್ಲ ರಾಜಕಾರಣಿಗಳಿಗಿಂತ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವ ಅಡ್ವಾಣಿಯವರು ಆ ಕಾಲದಲ್ಲಿ ನಿವೃತ್ತಿಯಾಗುವ ಯೋಚನೆಯನ್ನೇ ಮಾಡದವರು.
ಅಂತಹ ಸಮಯದಲ್ಲಿ ಅವರನ್ನು ಮನೆಗೆ ಕಳಿಸಲು ಆರ್‌ಎಸ್‌ಎಸ್‌ಗೆ ಎಂತಹ ಒತ್ತಡಗಳಿತ್ತೋ ಗೊತ್ತಿಲ್ಲ. ಭಾರತೀಯ ಜನತಾ ಪಕ್ಷದ ನಿಜವಾದ ಅಧಃಪತನ ಪ್ರಾರಂಭವಾಗಿದ್ದು ಅಲ್ಲಿಂದಲೇ.
ರಾಜಕೀಯ ಸಿದ್ದಾಂತದ ಬಗ್ಗೆ ಏನೇ ಭಿನ್ನಾಭಿಪ್ರಾಯ ಇದ್ದರೂ ವೈಯಕ್ತಿಕ ಮತ್ತು ಸಾರ್ವಜನಿಕ ನಡವಳಿಕೆಯಲ್ಲಿ ಈಗಲೂ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿರುವವರು ಲಾಲ್‌ಕೃಷ್ಣ ಅಡ್ವಾಣಿ. ಬುದ್ಧಿ ತಿಳಿದಂದಿನಿಂದ ಆರ್‌ಎಸ್‌ಎಸ್ ಶಿಬಿರಗಳಿಗೆ ಮಣ್ಣು ಹೊತ್ತವರು ಅವರು.
ಇಂತಹವರು `ಮಹಮ್ಮದ್ ಅಲಿ ಜಿನ್ನಾ ಜಾತ್ಯತೀತ ನೆಲೆಯಲ್ಲಿ ದೇಶ ನಿರ್ಮಾಣ ಮಾಡಬೇಕೆಂದು ಬಯಸಿದ್ದರು~ ಎಂದು ಹೇಳಿದ ಒಂದು ಮಾತೇ ಅವರ ರಾಜಕೀಯ ಬದುಕಿಗೆ ಮುಳುವಾಗಿ ಹೋಯಿತು. ಆರ್‌ಎಸ್‌ಎಸ್ ಪಟ್ಟು ಹಿಡಿದು ಕೊನೆಗೂ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತು.

ಪರಿವಾರದಿಂದಲೇ ಅವಮಾನಕ್ಕೊಳಗಾದ ಅಡ್ವಾಣಿಯವರಿಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಸಮರ್ಥ ನಾಯಕನಾಗಿ ಬಿಂಬಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.
ಹಿರಿಯರ ತಲೆದಂಡ ಕೇಳಿದ ಆರ್‌ಎಸ್‌ಎಸ್ ಬಳಿ ಅವರು ಖಾಲಿ ಮಾಡಿದ ಸ್ಥಾನಗಳಲ್ಲಿ ಕೂರಿಸಲು ಸಮರ್ಥ ಯುವನಾಯಕರೇ ಇರಲಿಲ್ಲ. ಕೊನೆಗೂ ಅಡ್ವಾಣಿ ಸ್ಥಾನದಲ್ಲಿ ಆರ್‌ಎಸ್‌ಎಸ್ ತಂದು ಕೂರಿಸಿದ್ದು ನೆಟ್ಟಗೆ ಒಂದು ಚುನಾವಣೆ ಗೆಲ್ಲಲಾಗದ ಉತ್ತರಭಾರತದ ಹಳೆಯ ಜಮೀನ್ದಾರಿಕೆಯ ಪಳೆಯುಳಿಕೆಯಂತೆ ಕಾಣುತ್ತಿರುವ ರಾಜನಾಥ್ ಸಿಂಗ್ ಅವರನ್ನು.
ಅದರ ನಂತರ ಆ ಸ್ಥಾನಕ್ಕೆ ಬಂದು ಕೂತದ್ದು ಗಲ್ಲಾಪೆಟ್ಟಿಗೆಯ ಮುಂದೆ ಕೂತಿರುವ ಸೇಠ್‌ಗಳಂತೆ ಕಾಣುತ್ತಿರುವ ನಿತಿನ್ ಗಡ್ಕರಿ. ಕೋಮುವಾದಕ್ಕಿಂತ ಭಿನ್ನವಾದ ಅಭಿವೃದ್ಧಿಯ ಅಜೆಂಡಾದೊಂದಿಗೆ ಪಕ್ಷವನ್ನು ಮುನ್ನಡೆಸುವ ಬಗ್ಗೆ ಯೋಚನೆ ಮಾಡುತ್ತಿದ್ದ ಪ್ರಮೋದ್ ಮಹಾಜನ್ ನಾಯಕನಾಗುವುದು ಅರ್‌ಎಸ್‌ಎಸ್‌ಗೆ ಬೇಕಾಗಿರಲಿಲ್ಲ.
 ಸ್ವತಂತ್ರ ವ್ಯಕ್ತಿತ್ವ ಮತ್ತು ಆಧುನಿಕ ಮನೋಭಾವದ ಮಹಾಜನ್ ಅವರನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಲಾಗದು ಎಂಬ ಭಯ ಇದಕ್ಕೆ ಕಾರಣ. ಇದಕ್ಕಾಗಿ ಮಹಾರಾಷ್ಟ್ರದಲ್ಲಿ ಮಹಾಜನ್ ವಿರುದ್ಧ ನಿತಿನ್ ಗಡ್ಕರಿ ಅವರನ್ನು ಎತ್ತಿಕಟ್ಟಿದ್ದೇ ಆರ್‌ಎಸ್‌ಎಸ್.  ಆ ಸಾಮೀಪ್ಯದ ಬಲದಿಂದಲೇ ಗಡ್ಕರಿ ನಂತರ  ಪಕ್ಷದ ಅಧ್ಯಕ್ಷ ಸ್ಥಾನಕ್ಕೇರಿದ್ದು.
ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯ ರಾಜಕೀಯ ಪಕ್ಷವಾಗಿ ಬೆಳೆಯಲು ಸಾಧ್ಯವಿದ್ದ ಬಿಜೆಪಿಯನ್ನು  ತನ್ನ ಸ್ವಾರ್ಥಸಾಧನೆಗಾಗಿ ಆರ್‌ಎಸ್‌ಎಸ್ ಬಲಿಕೊಟ್ಟಿತೇನೋ ಎಂದು ಮತ್ತೆಮತ್ತೆ ಅನಿಸುವುದು ಇದೇ ಕಾರಣಕ್ಕೆ.
ಇತಿಹಾಸದ ಚಕ್ರವನ್ನು ಸ್ವಲ್ಪ ಹಿಂದಕ್ಕೆ ತಿರುಗಿಸಿದರೆ ದೇಶದ ಮೊದಲ ಕಾಂಗ್ರೆಸ್ಸೇತರ ಸರ್ಕಾರ ರಚನೆಗೆ ಕಾರಣವಾದ `ಜನತಾ~ಪ್ರಯೋಗವನ್ನು ವಿಫಲಗೊಳಿಸಿದ್ದು ಕೂಡಾ ಆರ್‌ಎಸ್‌ಎಸ್ ಎನ್ನುವುದು ಗೊತ್ತಾಗುತ್ತದೆ.
ಕೇವಲ ಬ್ರಾಹ್ಮಣ-ಬನಿಯಾಗಳ ಮನೆಯಂಗಳದಲ್ಲಿ ಗಿರ್ಕಿ ಹೊಡೆಯುತ್ತಿದ್ದ ಆರ್‌ಎಸ್‌ಎಸ್ ಸಮಾಜದ ಮುಖ್ಯಪ್ರವಾಹದಲ್ಲಿ ಸೇರಿಕೊಳ್ಳಲು ನೆರವಾಗಿದ್ದು ಸಂಪೂರ್ಣ ಕ್ರಾಂತಿಯ ಶಿಲ್ಪಿ ಜಯಪ್ರಕಾಶ್ ನಾರಾಯಣ್.
ಅದರೆ ಜನತಾ ಸರ್ಕಾರದಲ್ಲಿದ್ದ ಸಮಾಜವಾದಿ ನಾಯಕರಾದ ಮಧು ಲಿಮಯೆ, ರಾಜ್‌ನಾರಾಯಣ್ ಮತ್ತು ಜಾರ್ಜ್ ಫರ್ನಾಂಡಿಸ್ `ದ್ವಿಸದಸ್ಯತ್ವ~ವಿವಾದ ಎತ್ತಿದಾಗ ಆರ್‌ಎಸ್‌ಎಸ್ ಮಧ್ಯೆ ಪ್ರವೇಶಿಸಿತು.
  ಇದರ ಒತ್ತಡಕ್ಕೆ ಮಣಿದ ವಾಜಪೇಯಿ-ಅಡ್ವಾಣಿ ಬಳಗ ಸರ್ಕಾರದಲ್ಲಿದ್ದವರು ಆರ್‌ಎಸ್‌ಎಸ್ ಸದಸ್ಯರಾಗುವಂತಿಲ್ಲ ಎನ್ನುವ ಅಭಿಪ್ರಾಯದ ವಿರುದ್ಧ ಸಿಡಿದೆದ್ದು `ಜನತಾ~ ತೊರೆದು `ಭಾರತೀಯ ಜನತಾ ಪಕ್ಷ~ ಕಟ್ಟಿತು.

ಆದರೆ ಆರ್‌ಎಸ್‌ಎಸ್‌ಗಾಗಿ ಅಧಿಕಾರ ತ್ಯಾಗ ಮಾಡಿದ ಇದೇ ನಾಯಕರನ್ನು 25 ವರ್ಷಗಳ ನಂತರ ಆರ್‌ಎಸ್‌ಎಸ್ ಸರ ಸಂಘಚಾಲಕ ಕೆ.ಎಸ್.ಸುದರ್ಶನ್ ಹೊರದಬ್ಬಲು ಹೊರಟದ್ದು ಮಾತ್ರ ಇತಿಹಾಸದ ವ್ಯಂಗ್ಯ.
 ಕೆ.ಎಸ್.ಸುದರ್ಶನ್ ಅವರು ವಾಜಪೇಯಿ ಮತ್ತು ಅಡ್ವಾಣಿಯವರ ತಲೆದಂಡ ಕೇಳಲು ಸ್ವಾರ್ಥವಲ್ಲದೆ ಬೇರೆ ಕಾರಣಗಳಿರಲಿಲ್ಲ. ತನ್ನ ಕೈಗೊಂಬೆಯಂತಿರುವ ನಾಯಕರನ್ನು ಮುಂದಿಟ್ಟುಕೊಂಡು ಪಕ್ಷವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂದು ಹೊರಟವರಿಗೆ ದೈತ್ಯ ನಾಯಕರಾದ ವಾಜಪೇಯಿ ಮತ್ತು ಅಡ್ವಾಣಿ ಅಡ್ಡಿಯಾಗಿದ್ದರು.
ಮೊದಲಿನಿಂದಲೂ ಇವರೆದುರು ಅಭದ್ರತೆಯಿಂದ ನರಳುತ್ತಾ ಬಂದ ಆರ್‌ಎಸ್‌ಎಸ್ ನಂತರದ ದಿನಗಳಲ್ಲಿ ಯಾವೊಬ್ಬ ನಾಯಕರನ್ನು ಸ್ವತಂತ್ರವಾಗಿ ಬೆಳೆಯಲು ಬಿಡಲೇ ಇಲ್ಲ. ವಿಚಿತ್ರವೆಂದರೆ ಬಿಜೆಪಿಯಲ್ಲಿ ನಾಯಕರಾಗಿ ಬೆಳೆದು ನಂತರ ಭ್ರಷ್ಟಾಚಾರ, ಅಶಿಸ್ತು ಮತ್ತು ದುರ್ನಡತೆಯ ಕಾರಣದಿಂದ ಹೊರ ಹೋದವರೆಲ್ಲರೂ ಊರಿಗೆಲ್ಲಾ ಶಿಸ್ತು, ಪ್ರಾಮಾಣಿಕತೆ, ಸಚ್ಚಾರಿತ್ರ್ಯ, ಸಂಸ್ಕಾರಗಳ ಪಾಠ ಹೇಳುವ ಆರ್‌ಎಸ್‌ಎಸ್ ಶಿಬಿರದಿಂದಲೇ ಬಂದವರು.

ಬಂಗಾರು ಲಕ್ಷ್ಮಣ್, ಕಲ್ಯಾಣ್‌ಸಿಂಗ್, ಉಮಾಭಾರತಿ, ಯಡಿಯೂರಪ್ಪ.. ಎಲ್ಲರೂ ರಾಜಕೀಯದ ಮೊದಲ ಪಾಠವನ್ನು ಆರ್‌ಎಸ್‌ಎಸ್ ಬೈಠಕ್‌ಗಳಲ್ಲಿಯೇ ಕಲಿತವರು.  ನಾನಾ ರೀತಿಯ ದೌರ್ಬಲ್ಯಗಳಿಗೆ ಬಲಿಯಾಗಬಲ್ಲ ಇಂತಹ ಶೂದ್ರ ನಾಯಕರನ್ನೇ ಹುಡುಕಾಡಿ ಆರ್‌ಎಸ್‌ಎಸ್ ಬೆಳೆಸಿದ್ದು, ಬೆಂಬಲಿಸಿದ್ದು.

ಇವರಿಗೆಲ್ಲ ಅಧಿಕಾರ ಕೊಟ್ಟರೆ ಹೀಗಾಗುತ್ತದೆ ನೋಡಿ ಎನ್ನುವ ಸಂದೇಶ ಕೊಡುವುದೂ ಇದರ ಹಿಂದಿನ ದುರುದ್ದೇಶ ಇರಬಹುದೇನೋ ಎಂದು ಸಂಶಯಪಡುವ ಹಾಗಿದೆ ಈ ನಾಯಕರ ಹಿನ್ನೆಲೆ ಮತ್ತು ಆರ್‌ಎಸ್‌ಎಸ್ ನಡವಳಿಕೆ. ರಾಜ್ಯದ ಹೊಸ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರಿಗೂ ಈ ನಾಯಕರೆಲ್ಲರ ಅನುಭವದಲ್ಲಿ ಕಲಿಯಬೇಕಾದ ಪಾಠ ಇರಬಹುದೇನೋ?
 ಕರ್ನಾಟಕದ ಬಿಜೆಪಿಯಲ್ಲಿ  ನಡೆಯುತ್ತಿರುವ ಈ ಎಲ್ಲ ರಾಜಕೀಯ ಬೆಳವಣಿಗೆಗಳಿಂದ ರೋಸಿ ಹೋದವರಲ್ಲಿ ಅನೇಕರು `ಆ ಪಕ್ಷದಲ್ಲಿ ಒಂದು ಬಲವಾದ ಹೈಕಮಾಂಡ್ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ~ ಎಂದು ನಿಟ್ಟುಸಿರು ಬಿಡುತ್ತಾರೆ.
ದೆಹಲಿಯಿಂದಲೇ ಎಲ್ಲವನ್ನೂ ನಿಯಂತ್ರಿಸುವ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಂಸ್ಕೃತಿಯನ್ನು ಒಂದು ಕಾಲದಲ್ಲಿ ಇವರೇ ಟೀಕಿಸುತ್ತಿದ್ದವರು. ರಾಷ್ಟ್ರೀಯ ಪಕ್ಷಗಳ  ಅಟ್ಟಹಾಸದಿಂದ ಬೇಸತ್ತು ಹೋದವರೆಲ್ಲರೂ ಪ್ರಾದೇಶಿಕ ಮಟ್ಟದಲ್ಲಿ ನಾಯಕರು ಬೆಳೆಯಲಿ ಎಂದು ದೇವರಿಗೆ ಕೈಮುಗಿದವರೇ ಆಗಿದ್ದಾರೆ.
ಇದೇ ಜನ ಈಗ `ಪ್ರಾದೇಶಿಕ ಪಾಳೆಯಗಾರ~ರದ್ದು ಅತಿ ಆಯಿತು, ಇವರನ್ನು ನಿಯಂತ್ರಿಸುವಂತಹ ಬಲಶಾಲಿ ನಾಯಕರು ಪಕ್ಷಗಳ ಹೈಕಮಾಂಡ್‌ನಲ್ಲಿರಬೇಕು ಎಂದು ಹೇಳುತ್ತಿದ್ದಾರೆ. ಈ ರೀತಿಯ ತಕ್ಷಣದ ಪ್ರತಿಕ್ರಿಯೆಗಳನ್ನು ಆಧರಿಸಿ ಭಾರತದ ರಾಜಕಾರಣ ಮಗ್ಗುಲು ಬದಲಾಯಿಸುತ್ತದೆ ಎಂದು ಹೇಳಲಾಗದು.

ಆದರೆ ರಾಜಕೀಯ ಪಕ್ಷಗಳಲ್ಲಿ ಶಕ್ತಿಶಾಲಿ ನಾಯಕರನ್ನೊಳಗೊಂಡ ಬಲವಾದ ಹೈಕಮಾಂಡ್ ಬಗ್ಗೆ ಚರ್ಚೆ ಸಣ್ಣದಾಗಿಯಾದರೂ ಪ್ರಾರಂಭವಾಗಿದೆ. ಇದು ಹೇಗೆ ಮುಂದುವರಿಯುತ್ತದೋ ಕಾದು ನೋಡಬೇಕು.

Monday, August 1, 2011

ನಾಯಕ ಬದಲಾದರು, ವ್ಯವಸ್ಥೆ ಬದಲಾಗುವುದೇ?

ಬಿ.ಎಸ್.ಯಡಿಯೂರಪ್ಪನವರು ಹೀಗೇಕಾದರು ಎಂದು ಯಾರೂ ಅಚ್ಚರಿ ಪಡಬೇಕಾಗಿಲ್ಲ, ಅವರಿದ್ದದ್ದೇ ಹೀಗೆ. ತೊಂಬತ್ತರ ದಶಕದಲ್ಲಿ ಭಾರತೀಯ ಜನತಾ ಪಕ್ಷ ಯಡಿಯೂರಪ್ಪನವರನ್ನು ತಮ್ಮ ನಾಯಕನೆಂದು ಬಿಂಬಿಸಿದ್ದಾಗಲೂ, ಆ ಆಯ್ಕೆಗೆ ಆರ್‌ಎಸ್‌ಎಸ್ ಸೇರಿದಂತೆ ಸಂಘ ಪರಿವಾರದ ಸಕಲ ಅಂಗಸಂಸ್ಥೆಗಳು ಬೆಂಬಲದ ಜಯಘೋಷ ಮಾಡಿದ್ದಾಗಲೂ ಮತ್ತು ವೀರಶೈವ ಮಠಗಳು ತಮ್ಮ ನಾಯಕನೆಂದು ಆಶೀರ್ವಾದ ಮಾಡಿದ್ದಾಗಲೂ ಅವರು ಹೀಗೆಯೇ ಇದ್ದರು.

ಅಧಿಕಾರಕ್ಕೆ ಬಂದು ಯಡಿಯೂರಪ್ಪನವರು ಹೀಗಾಗಿದ್ದಲ್ಲ. ಹೌದು, ಈಗ ಹೆಚ್ಚುವರಿಯಾಗಿ ಒಂದಷ್ಟು ಭ್ರಷ್ಟಾಚಾರದ ಆರೋಪಗಳನ್ನು ಅವರು ಎದುರಿಸುತ್ತಿರಬಹುದು. ಹಿಂದೆ ಯಾಕೆ ಭ್ರಷ್ಟರಾಗಿರಲಿಲ್ಲ ಎನ್ನುವ ಪ್ರಶ್ನೆಗೆ ಆಗ ಅವಕಾಶ ಇರಲಿಲ್ಲ ಎನ್ನುವುದಷ್ಟೇ ಸರಳವಾದ ಉತ್ತರ.
ಕರ್ನಾಟಕದ ರಾಜಕೀಯವನ್ನು ಅಧ್ಯಯನ ಮಾಡುವವರ‌್ಯಾರಿಗೂ ಬ್ರಿಟಿಷ್ ವಿದ್ವಾಂಸ ಜೇಮ್ಸ ಮ್ಯಾನರ್ ಅಪರಿಚಿತ ಹೆಸರೇನಲ್ಲ. ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಸ್ಟಡಿಯಲ್ಲಿ ಬೋಧನೆ ಮಾಡುತ್ತಿರುವ ಜೇಮ್ಸ ಮ್ಯಾನರ್ ಕಳೆದ 40 ವರ್ಷಗಳಿಂದ ಕರ್ನಾಟಕದ ರಾಜಕೀಯವನ್ನು ವಿಶೇಷವಾಗಿ ಅಧ್ಯಯನ ಮಾಡುತ್ತಾ ಬಂದವರು.
ಈ ಬಗ್ಗೆ ಹಲವಾರು ಪುಸ್ತಕಗಳನ್ನು ಮತ್ತು ನೂರಾರು ಲೇಖನಗಳನ್ನು ಅವರು ಬರೆದಿದ್ದಾರೆ. ಹೆಚ್ಚುಕಡಿಮೆ ಪ್ರತಿವರ್ಷ ಅವರು ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಇಂತಹ ಜೇಮ್ಸ ಮ್ಯಾನರ್ 1994ರಲ್ಲಿ ಬೆಂಗಳೂರಿಗೆ ಬಂದಿದ್ದಾಗ ಬಿಜೆಪಿಯ ಇಬ್ಬರು ಯುವ ಕಾರ‌್ಯಕರ್ತರನ್ನು ಭೇಟಿಯಾಗಿದ್ದರು.
`ಎಕಾನಾಮಿಕ್ ಆ್ಯಂಡ್ ಪೊಲಿಟಿಕಲ್ ವೀಕ್ಲಿ~ಯ ಇತ್ತೀಚಿನ ತನ್ನ ಲೇಖನದಲ್ಲಿ ಅವರು ಹದಿನೈದು ವರ್ಷಗಳ ಹಿಂದಿನ ತಮ್ಮ ಭೇಟಿಯ ಅನುಭವ ಮೆಲುಕುಹಾಕಿದ್ದಾರೆ.
`....ಆಗಷ್ಟೇ ಕೊನೆಗೊಂಡಿದ್ದ ಚುನಾವಣೆಯಲ್ಲಿ ಬಿಜೆಪಿ ತನ್ನ ಬಲವರ್ಧನೆ ಮಾಡಿಕೊಂಡಿದ್ದ ಕಾಲ ಅದು.
ಇಂತಹ ಸ್ಥಿತಿಯಲ್ಲಿ ಈ ಇಬ್ಬರು ಯುವ ಕಾರ್ಯಕರ್ತರು ಆಶಾವಾದದಿಂದ ತುಂಬಿ ತುಳುಕುತ್ತಿರಬಹುದೆಂದು ನಿರೀಕ್ಷಿಸಿದ್ದೆ. ಆದರೆ ಅವರು ಪ್ರಾರಂಭದಿಂದಲೇ ವ್ಯಾಕುಲರಾಗಿದ್ದರು. ಅವರ ಮುಖದಲ್ಲಿ ಬಚ್ಚಿಟ್ಟುಕೊಳ್ಳಲಾಗದ ವಿಷಣ್ಣತೆ ಇತ್ತು.
ಮಾತನಾಡುತ್ತಾ ಹೋದಂತೆ ಅವರು ಇನ್ನಷ್ಟು ಚಿಂತಾಕ್ರಾಂತರಾದಂತೆ ಕಂಡರು. ಅವರು ಒಂದೇ ಸಮನೆ ತಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ದೂರುಗಳನ್ನು ಹೇಳುತ್ತಾ ಹೋದರು....~ ಎಂದು ಅವರು ತಮ್ಮ ಲೇಖನ ಪ್ರಾರಂಭಿಸುತ್ತಾರೆ.

ಆ ಯುವಕಾರ್ಯಕರ್ತರ ಮಾತುಗಳಲ್ಲೇ ಅವರಾಡಿದ್ದನ್ನು ಕೇಳಿ:`...ಅವರು ದುರಹಂಕಾರಿ, ಯಾರ ಮಾತನ್ನೂ ಕೇಳುವುದಿಲ್ಲ. ಪಕ್ಷದ ಬಲವರ್ಧನೆಗಾಗಿ ಬಳಸಿಕೊಳ್ಳಬಹುದಾದ ಅವಕಾಶಗಳು ಮತ್ತು ಪಕ್ಷದ ಬಲ ಕುಂದಲು ಕಾರಣವಾಗಬಹುದಾದ ತಪ್ಪುಗಳ ಬಗ್ಗೆ ನೀಡುವ ಮಾಹಿತಿಗಳನ್ನು ಅವರು ನಿರ್ಲಕ್ಷಿಸುತ್ತಾರೆ.
ಆದ್ದರಿಂದ ಹಲವಾರು ಬಾರಿ ರಾಜಕೀಯ ಅನುಕೂಲಗಳಿಂದ ಪಕ್ಷ ವಂಚಿತವಾಗಬೇಕಾಯಿತು. ಪ್ರತಿಬಾರಿ ಅವರು ತಪ್ಪು ನಿರ್ಧಾರಗಳಿಂದಾಗಿ ಮುಜುಗರಕ್ಕೊಳಗಾಗುತ್ತಾರೆ  ಮತ್ತು ಯಾರದ್ದೋ ಸಂಚಿಗೆ ಬಲಿಯಾಗುತ್ತಾರೆ.

ಅವರೊಬ್ಬ ಬುದ್ಧಿವಂತ, ಆದರೆ ಸರಿಯಾದ ರಾಜಕೀಯ ನಿರ್ಧಾರ ಕೈಗೊಳ್ಳಲಾಗದ ನಾಯಕನೆಂದು ನಾವು ತಿಳಿದುಕೊಂಡಿದ್ದೆವು. ಆದರೆ, ಮಾಡುವ ತಪ್ಪುಗಳನ್ನು ನೋಡುತ್ತಾ ಬಂದಾಗ ಅವರು ಅಷ್ಟೇನೂ ಬುದ್ಧಿವಂತರಲ್ಲ ಎಂದು ಅರಿವಾಯಿತು.
ಅಷ್ಟು ಮಾತ್ರವಲ್ಲ, ಅವರೊಬ್ಬ ಪ್ರಜಾಪ್ರಭುತ್ವ ವಿರೋಧಿ. ಪಕ್ಷದ ಸಹೋದ್ಯೋಗಿಗಳ ಮಾತುಗಳಿಗೆ ಕಿವಿಗೊಡುವುದಿಲ್ಲ. ಕಾಂಗ್ರೆಸ್ ಮತ್ತು ಜನತಾ ಪಕ್ಷಗಳಿಗಿಂತ ಹೆಚ್ಚು ಪ್ರಜಾಸತ್ತಾತ್ಮಕವಾಗಿರುವ ಬಿಜೆಪಿಯಲ್ಲಿ ಈ ನಡವಳಿಕೆ ಗಂಭೀರ ಸ್ವರೂಪದ ಅಪರಾಧ.
ಪಕ್ಷದ ಸಮಿತಿಗಳಿಗೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳನ್ನು ಅವರು ಲಕ್ಷಿಸುವುದಿಲ್ಲ. ಪಕ್ಷ ರೂಪಿಸುವ ಕಾರ್ಯತಂತ್ರಗಳನ್ನು ಅವರು ಒಪ್ಪುವುದಿಲ್ಲ. ಯಾರಾದರೂ ಅವರನ್ನು ಪ್ರಶ್ನಿಸಿದರೆ ಸಿಟ್ಟಾಗುತ್ತಾರೆ. ಎದುರಾಳಿಯ ಮಾತನ್ನು ತನ್ನ ವಾದದ ಮೂಲಕ ಎದುರಿಸುವುದಿಲ್ಲ, ಕೂಗಾಡಿ ಬಾಯಿ ಮುಚ್ಚಿಸುತ್ತಾರೆ...~
`..ಭಿನ್ನ ಪಕ್ಷ ಎಂಬ ಹೆಗ್ಗಳಿಕೆಯ ಬಿಜೆಪಿಯ ನಾಯಕನೊಬ್ಬನಿಂದ ನಾವು ನಿರೀಕ್ಷಿಸಿದ್ದ ಸಜ್ಜನಿಕೆ ಮತ್ತು ತಾಳ್ಮೆಯ ನಡವಳಿಕೆಯನ್ನು ನಮಗೆ ಕಾಣಲಾಗುತ್ತಿಲ್ಲ. ಅವರು ಸೂಕ್ಷ್ಮವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವಾಸ್ತವವನ್ನು ಎದುರಿಸುವುದಿಲ್ಲ, ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಾರೆ.
ಅಸಾಧ್ಯವಾದುದನ್ನು ಸಾಧ್ಯಮಾಡಲು ಪ್ರಯತ್ನಿಸುತ್ತಾರೆ. ಅದು ಸಾಧ್ಯವಾಗದೆ ಇದ್ದಾಗ ಇತರರನ್ನು ಬೈದು ಯಾರಿಗೂ ತಿಳಿಸದೆ ಇನ್ನೊಂದು ಅಡ್ಡಾದಿಡ್ಡಿ ದಾರಿ ಹಿಡಿಯುತ್ತಾರೆ. ಇದರಿಂದ ಪರಿಸ್ಥಿತಿ ಇನ್ನಷ್ಟು ಕೆಟ್ಟುಹೋಗುತ್ತದೆ.
ಅಧಿಕಾರ ಒಬ್ಬ `ದಡ್ಡ~ ನಾಯಕನ ಕೈಯಲ್ಲಿ ಕೇಂದ್ರೀಕೃತವಾಗಿರುವ ಅಪಾಯಕಾರಿ ಪರಿಸ್ಥಿತಿ ಇದು. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ...~ಇಷ್ಟು ಹೇಳಿದ ನಂತರ ಇಬ್ಬರಲ್ಲಿ ಒಬ್ಬ ಯುವಕ ಬಿಕ್ಕಿಬಿಕ್ಕಿ ಅಳತೊಡಗಿದನಂತೆ. `...ಕರ್ನಾಟಕದ ರಾಜಕೀಯವನ್ನು ಕಳೆದ ನಲ್ವತ್ತು ವರ್ಷಗಳಿಂದ ಅಧ್ಯಯನ ಮಾಡುತ್ತಾ ಬಂದ ನಾನು ಈ ರೀತಿ ಒಂದು ಪಕ್ಷದ ಕಾರ್ಯಕರ್ತ ತನ್ನದೇ ಪಕ್ಷದ ನಾಯಕನ ಬಗ್ಗೆ ಹತಾಶೆಗೊಂಡು ಕಣ್ಣೀರು ಹಾಕಿದ್ದನ್ನು ನೋಡಿಲ್ಲ...~ ಎನ್ನುತ್ತಾರೆ ಜೇಮ್ಸ ಮ್ಯಾನರ್ ಆ ಲೇಖನದಲ್ಲಿ.

ಇದನ್ನು ಓದಿದ ಮೇಲೆ ಯಡಿಯೂರಪ್ಪನವರು ಹೀಗ್ಯಾಕಾದರು ಎಂದು ಯಾರೂ ಕೇಳಲಾರರು. ಅವರು ಹೀಗೆಯೇ ಇದ್ದರು.ಹೀಗಿದ್ದರೂ ಅವರನ್ನು ತನ್ನ ನಾಯಕನೆಂದು ಬಿಜೆಪಿ ಯಾಕೆ ಬಿಂಬಿಸಿತು? ಸಂಘ ಪರಿವಾರ ಯಾಕೆ ಬೆಂಬಲ ಧಾರೆ ಎರೆಯಿತು? ವೀರಶೈವ ಮಠಗಳು ಅವರನ್ನು ಜಾತಿ ನಾಯಕನಾಗಿ ಯಾಕೆ ಬೆಳೆಸಿದವು? ಯಾವ ದಾರಿಯಾದರೂ ಸರಿ, ಗುರಿ ತಲುಪುವುದಷ್ಟೇ ಮುಖ್ಯ ಎಂದು ತಿಳಿದುಕೊಂಡ ಬಿಜೆಪಿಗೆ ಅಧಿಕಾರ ಬೇಕಿತ್ತು.
ತನ್ನ ಗುಪ್ತಕಾರ್ಯಸೂಚಿಯ ಅನುಷ್ಠಾನಕ್ಕಾಗಿ ಸಂಘ ಪರಿವಾರಕ್ಕೆ ತನ್ನ ಮಾತು ಕೇಳುವ ಮುಖ್ಯಮಂತ್ರಿ ಬೇಕಿತ್ತು. ಆಗಲೇ `ಧರ್ಮ~ದ ಹಾದಿಯಿಂದ `ಅರ್ಥ~ದ ಹಾದಿಗೆ ಹೊರಳುತ್ತಿದ್ದ ವೀರಶೈವ ಮಠಗಳಿಗೆ ತಮ್ಮ ಧಾರ್ಮಿಕ ಸಾಮ್ರಾಜ್ಯದ ವಿಸ್ತರಣೆಗೆ ನೆರವಾಗಬಲ್ಲ ಜಾತಿ ನಾಯಕನೊಬ್ಬ ಬೇಕಿತ್ತು.

ಆಗ ಎಲ್ಲರ ಕಣ್ಣಿಗೆ ಕಂಡದ್ದು ಯಡಿಯೂರಪ್ಪ. ಅವರು ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದವರು, ಜಾತಿಯಿಂದ ಲಿಂಗಾಯತರು, ಸ್ವಭಾವದಲ್ಲಿ ಹೋರಾಟ ಮನೋಭಾವದವರು. ಬೇರೇನು ಬೇಕು?
ಈಗ ಒಮ್ಮಿಂದೊಮ್ಮೆಲೇ ಯಡಿಯೂರಪ್ಪನವರು ಎಲ್ಲರಿಗೂ ಖಳನಾಯಕರಂತೆ ಕಾಣುತ್ತಿದ್ದಾರೆ. ಯಡಿಯೂರಪ್ಪನವರ ನಿರ್ಗಮನದಿಂದ ಕರ್ನಾಟಕವನ್ನು ಆವರಿಸಿಕೊಂಡಿರುವ ಎಲ್ಲ ಅನಿಷ್ಟಗಳು ನಿವಾರಣೆಯಾಗಬಹುದೆನ್ನುವ ರೀತಿಯಲ್ಲಿ ಪ್ರಚಾರ ನಡೆಯುತ್ತಿದೆ.
ಆದರೆ, `ಮನುಷ್ಯ ವ್ಯವಸ್ಥೆಯ ಕೂಸು~ ಎನ್ನುವ ಸತ್ಯ ತಿಳಿದುಕೊಂಡವರ‌್ಯಾರೂ ಯಡಿಯೂರಪ್ಪನವರ ನಿರ್ಗಮನದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಾರರು. ಜನಪರ ಕಾಳಜಿಯ ಹೋರಾಟಗಾರನಾಗಿ ರಾಜಕೀಯ ಪ್ರವೇಶಿಸಿದ ಯಡಿಯೂರಪ್ಪನವರು ರಾಜ್ಯ ಕಂಡ ಅತೀ ಭ್ರಷ್ಟ, ಅಸಮರ್ಥ ಮತ್ತು ಜಾತಿವಾದಿ ಮುಖ್ಯಮಂತ್ರಿ ಎಂಬ ಆರೋಪಗಳ ಹೊರೆ ಹೊತ್ತು ನಿರ್ಗಮಿಸುವಂತಾಗಲು ಕಾರಣವಾದ ವ್ಯವಸ್ಥೆ ಇನ್ನೂ ಜೀವಂತವಾಗಿದೆ.
ಹೊಸ ನಾಯಕನ ಆಯ್ಕೆಯಲ್ಲಿ ಕೂಡಾ ಅದೇ ಹಳೆಯ ವ್ಯವಸ್ಥೆಯದ್ದೇ ಮುಖ್ಯ ಪಾತ್ರ. ಹೊಸ ನಾಯಕ ಕೂಡಾ  ಹಳೆಯ ವ್ಯವಸ್ಥೆಯ ಕೂಸಾಗಿ ಬಿಟ್ಟರೆ ಬದಲಾವಣೆ ಹೇಗೆ ನಿರೀಕ್ಷಿಸಲು ಸಾಧ್ಯ?
ಈ ವ್ಯವಸ್ಥೆಯ ಮೊದಲ ಘಟಕ-ಭಾರತೀಯ ಜನತಾ ಪಕ್ಷ. ಒಂದು ಸ್ವತಂತ್ರ, ಪರಿಪೂರ್ಣ ರಾಜಕೀಯ ಪಕ್ಷವಾಗಿ ಬೆಳೆಯಲು ಸಾಧ್ಯವಾಗದೆ ಹೋಗಿದ್ದೇ ಈ ಪಕ್ಷದ ಮೂಲ ಸಮಸ್ಯೆ. ಪಕ್ಷ ಏನಿದ್ದರೂ ಮುಖವಾಡ, ಅದರ ಮಾತೃಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿಜವಾದ ಮುಖ.
ಇಲ್ಲಿ ಪಕ್ಷಕ್ಕಿಂತಲೂ ಮುಖ್ಯವಾದುದು ಮಾತೃಸಂಸ್ಥೆಯ ಮೇಲಿನ ನಿಷ್ಠೆ. ಪಕ್ಷವನ್ನು ಧಿಕ್ಕರಿಸಿಯೂ ಇಲ್ಲಿ ಬದುಕುಳಿಯಬಹುದು, ಆದರೆ ಸಂಘ ಪರಿವಾರವನ್ನಲ್ಲ. ಅಟಲಬಿಹಾರಿ ವಾಜಪೇಯಿ ಮತ್ತು ಲಾಲ್‌ಕೃಷ್ಣ ಅಡ್ವಾಣಿಯವರಂತಹವರು ನಿರ್ಣಾಯಕ ಸ್ಥಾನದಲ್ಲಿರುವಷ್ಟು ದಿನ ತಮ್ಮ ವ್ಯಕ್ತಿತ್ವದ ಬಲದಿಂದ ಪಕ್ಷಕ್ಕೆ ಒಂದಿಷ್ಟು ಆತ್ಮಗೌರವ ತುಂಬಿದ್ದರು.
ಅವರ ನಿರ್ಗಮನದ ನಂತರ ಅದೊಂದು ದುರ್ಬಲ ಮತ್ತು ಪರಾವಲಂಬಿ ಪಕ್ಷ. ಅಲ್ಲಿ ಮುಖ್ಯಮಂತ್ರಿಗಳಿಂದ ಹಿಡಿದು ರಾಜ್ಯ, ರಾಷ್ಟ್ರೀಯ ಅಧ್ಯಕ್ಷರವರೆಗೆ ಯಾರು ಏನಾಗಬೇಕೆಂಬುದನ್ನು ನಿರ್ಧರಿಸುವುದು ಪಕ್ಷ ಅಲ್ಲವೇ ಅಲ್ಲ, ಅದು ಸಂಘದ ನಾಯಕರು.
ಪಕ್ಷದ ಈ ದೌರ್ಬಲ್ಯ ಅರಿತವರು ಅದರ ಆದೇಶಕ್ಕೆ ಎಷ್ಟು ಬೆಲೆ ಕೊಡಬಹುದು? ಪಕ್ಷದ ಸಂಸದೀಯ ಮಂಡಳಿಯ ನಿರ್ಣಯವನ್ನು ಅನುಷ್ಠಾನಕ್ಕೆ ತರಲಾಗದೆ ಬಿಜೆಪಿ ವರಿಷ್ಠರು ಮೂರು ದಿನಗಳ ಕಾಲ ದೇಶದ ಮುಂದೆ ನಗೆಪಾಟಲಿಗೀಡಾಗಿದ್ದು ಇದೇ ಕಾರಣಕ್ಕೆ. ಈಗಲೂ ಸಂಘ ಪರಿವಾರದ ಆಯ್ಕೆಗೆ ಮೊಹರು ಒತ್ತುವುದಷ್ಟೇ ಪಕ್ಷದ ಕೆಲಸ.
ವ್ಯವಸ್ಥೆಯ ಎರಡನೇ ಘಟಕ-ಸಂಘ ಪರಿವಾರ. ಸಮಸ್ತ ಹಿಂದೂ ಸಮುದಾಯದ ಹಿತಚಿಂತನೆ ನಡೆಸುವವರು ನಾವೆಂದು ಹೇಳಿಕೊಳ್ಳುತ್ತಿರುವ ಈ ಪರಿವಾರದ ನಾಯಕರು ರಾಜಕೀಯದ ಪ್ರಶ್ನೆ ಬಂದಾಗ ಮಾತ್ರ ಬಿಜೆಪಿ ಜತೆ ನಿಲ್ಲುತ್ತಾರೆ.
ಬಿಕ್ಕಟ್ಟುಗಳು ಎದುರಾದಾಗ  ಪ್ರಶ್ನಿಸಿದರೆ  `ಅದು ಸಂಪೂರ್ಣವಾಗಿ ಪಕ್ಷಕ್ಕೆ ಬಿಟ್ಟ ವಿಚಾರ. ಅದರಲ್ಲಿ ನಾವು ತಲೆಹಾಕುವುದಿಲ್ಲ~ ಎನ್ನುತ್ತಾರೆ. ಹಾಗ್ದ್ದಿದರೆ ಬಿಜೆಪಿಯ ಕೋರ್ ಕಮಿಟಿಯಲ್ಲಿ ಆರ್‌ಎಸ್‌ಎಸ್ ಪ್ರತಿನಿಧಿಗಳಿಗೇನು ಕೆಲಸ? ಕಾಂಗ್ರೆಸ್, ಜೆಡಿ (ಎಸ್)ನ ಕೋರ್ ಕಮಿಟಿಯಲ್ಲಿಯೂ ಅವರಿದ್ದಾರೇನು? ವಾಸ್ತವ ಏನೆಂದರೆ ಈಗಲೂ ಆರ್‌ಎಸ್‌ಎಸ್ ರಿಮೋಟ್ ಕಂಟ್ರೋಲ್ ಮೂಲಕ ಬಿಜೆಪಿಯ ನೀತಿ  ನಿರ್ಧಾರಗಳನ್ನು ನಿಯಂತ್ರಿಸುತ್ತಿದೆ.

ಇದರ ನಾಯಕರು ಮಹಮ್ಮದ್ ಅಲಿ ಜಿನ್ನಾ ಬಗ್ಗೆ ಅಡ್ವಾಣಿಯವರು ನೀಡಿದ ಸಣ್ಣ ಹೇಳಿಕೆಗಾಗಿ ಅವರ ತಲೆದಂಡ ಪಡೆಯುತ್ತಾರೆ, ಜಸ್ವಂತ್‌ಸಿಂಗ್ ಬರೆದ ಪುಸ್ತಕದಲ್ಲಿ ಜಿನ್ನಾ ಪರವಾದ ಅಭಿಪ್ರಾಯ ಇದೆ ಎನ್ನುವ ಕಾರಣಕ್ಕಾಗಿ ಪಕ್ಷದಿಂದಲೇ ಅವರ ಉಚ್ಚಾಟನೆಯಾಗುವಂತೆ ಮಾಡುತ್ತಾರೆ.
ಆದರೆ ತಮ್ಮದೇ ಪರಿವಾರದ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ನೀಡಿರುವ ವರದಿ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಇದೆಂಥ ಆತ್ಮವಂಚನೆ? ಯಡಿಯೂರಪ್ಪ ರಾಜೀನಾಮೆ ಮತ್ತು ಹೊಸ ಮುಖ್ಯಮಂತ್ರಿಯ ಆಯ್ಕೆಯ ಪ್ರಕ್ರಿಯೆ ಕಗ್ಗಂಟಾಗಲು ಕೂಡಾ ಕರಾವಳಿ ಮತ್ತು ಉತ್ತರ ಕರ್ನಾಟಕದ ಆರ್‌ಎಸ್‌ಎಸ್ ನಾಯಕರ ನಡುವಿನ ಭಿನ್ನಾಭಿಪ್ರಾಯ ಕಾರಣವೆನ್ನಲಾಗಿದೆ.

ಕೊನೆಗೂ ಈ ನಾಯಕರೇ ಹೊಸ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ನಿರ್ಧರಿಸಲಿದ್ದಾರೆ. ಈ ಬಾರಿ ಕರಾವಳಿ ಆರ್‌ಎಸ್‌ಎಸ್ ಕೈಮೇಲಾದರೆ ಆಶ್ಚರ್ಯ ಇಲ್ಲ.  ಶಾಸಕರ ಅಭಿಪ್ರಾಯ ಸಂಗ್ರಹ, ಶಾಸಕಾಂಗ ಪಕ್ಷದ ಸಭೆ -ಇವೆಲ್ಲ ಸಾರ್ವಜನಿಕರ ಗಮನಕ್ಕಾಗಿ ನಡೆಯುತ್ತಿರುವ ನಾಟಕ ಅಷ್ಟೇ.
ವ್ಯವಸ್ಥೆಯ ಮೂರನೇ ಘಟಕ-ವೀರಶೈವ ಮಠಗಳು. ಈ ಮಠಗಳ ಒಂದಷ್ಟು ಸ್ವಾಮಿಗಳು ಮೊದಲು ಯಡಿಯೂರಪ್ಪನವರ ಬೆಂಬಲಕ್ಕೆ ನಿಂತರು. ಈಗ ಮುಂದಿನ ಮುಖ್ಯಮಂತ್ರಿ ಸ್ಥಾನ ಲಿಂಗಾಯತರಿಗೇ ನೀಡಬೇಕೆಂದು ಹೇಳುತ್ತಿರುವುದು ಮಾತ್ರವಲ್ಲ, ಅಭ್ಯರ್ಥಿ ಯಾರೆಂಬುದನ್ನೂ ಸೂಚಿಸುತ್ತಿದ್ದಾರೆ.
ಅವರು ಸೂಚಿಸುತ್ತಿರುವ ಅಭ್ಯರ್ಥಿಗಳು ಸಮರ್ಥರೇ ಇರಬಹುದು. ಆದರೆ ಅವರು ಮಠಗಳ ಅಭ್ಯರ್ಥಿಯಾಗಿ ಕಾಣಿಸಿಕೊಳ್ಳಬೇಕೇ? ತಾವು ಬೆಂಬಲಿಸಿಕೊಂಡು ಬಂದ ಮುಖ್ಯಮಂತ್ರಿಯ ವಿರುದ್ಧ ಲೋಕಾಯುಕ್ತ ಮಾಡಿರುವ ಗಂಭೀರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ಹೋಗದೆ ನುಣುಚಿಕೊಳ್ಳುತ್ತಿರುವ ಈ ಸ್ವಾಮಿಗಳಿಗೆ ಹೊಸ ಮುಖ್ಯಮಂತ್ರಿ ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಸೂಚಿಸುವ ನೈತಿಕತೆಯಾದರೂ ಎಲ್ಲಿದೆ?
ಭಾರತೀಯ ಜನತಾ ಪಕ್ಷ ಇಷ್ಟೊಂದು ದುರ್ಬಲಗೊಳ್ಳದೆ ಸ್ವಂತ ನಿರ್ಧಾರ ಕೈಗೊಳ್ಳುವಷ್ಟು ಶಕ್ತಿ ಹೊಂದಿದ್ದರೆ,  ಆ ಪಕ್ಷದ ಜುಟ್ಟು ಕೈಯಲ್ಲಿಟ್ಟುಕೊಳ್ಳದೆ ಅದನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಂಘ ಪರಿವಾರ ಅವಕಾಶ ನೀಡಿದ್ದರೆ ಮತ್ತು ಎಲ್ಲವನ್ನೂ ಜಾತಿಯ ಕನ್ನಡಕದಲ್ಲಿ ನೋಡಲು ಹೋಗದೆ ತಪ್ಪು-ಸರಿಗಳ ನಿರ್ಣಯವನ್ನು ಜಾತ್ಯತೀತವಾಗಿ ಕೈಗೊಳ್ಳುವ ದಿಟ್ಟತನವನ್ನು ವೀರಶೈವ ಮಠಗಳು ತೋರಿದ್ದರೆ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಪರಿಸ್ಥಿತಿ ಖಂಡಿತ ಬರುತ್ತಿರಲಿಲ್ಲ. ತಪ್ಪುಗಳನ್ನು ತಿದ್ದಿಕೊಂಡು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಿದ್ದರು.

Monday, July 25, 2011

ಆಗ ಪಾಟೀಲರ ಕಾಲ, ಈಗ ಯಡಿಯೂರಪ್ಪನವರದ್ದು...

`ಇಂಟೆಲಿಜೆನ್ಸ್ ಅಧಿಕಾರಿ ಯಾರ ಟೆಲಿಫೋನ್ ಕದ್ದಾಲಿಸಬೇಕೆಂದು ಮುಖ್ಯಮಂತ್ರಿಗಳಿಂದ ಲಿಖಿತ ಆದೇಶ ಪಡೆಯುವುದಿಲ್ಲ. ಇಂತಹ ಶಾಸಕ ಇಲ್ಲವೇ ಸಾರ್ವಜನಿಕ ವ್ಯಕ್ತಿಯ ಚಟುವಟಿಕೆ ಮೇಲೆ ಕಣ್ಣಿಡಿ ಎಂದರೆ ಸಾಕು, ಆ ಅಧಿಕಾರಿ ಸಂಬಂಧಿಸಿದವರ ಟೆಲಿಫೋನ್ ನಂಬರ್ ತೆಗೆದುಕೊಂಡು ಅದನ್ನು ಟೆಲಿಗ್ರಾಫ್ ಇಲಾಖೆಯ ಜನರಲ್ ಮ್ಯಾನೇಜರ್‌ಗೆ ತಿಳಿಸುತ್ತಾರೆ. ಆಗ ಆ ಜನರಲ್ ಮ್ಯಾನೇಜರ್ ಇಂಟೆಲಿಜೆನ್ಸ್ ಅಧಿಕಾರಿಗೆ ಆ ಟೆಲಿಫೋನ್ ಕದ್ದಾಲಿಸುವ ಉಪಕರಣ ಪೂರೈಸುತ್ತಾರೆ. ನಂತರ ಆ ಕೆಲಸ ಸಲೀಸಾಗಿ ನಡೆಯುತ್ತದೆ. ಯಾವುದೇ ಇಂಟೆಲಿಜೆನ್ಸ್ ಅಧಿಕಾರಿ ಮುಖ್ಯಮಂತ್ರಿಯ ವಿಶ್ವಾಸದ ಮೇಲೆ ಕೆಲಸ ಮಾಡುತ್ತಾನೆ. ಇಲ್ಲದೆ ಹೋದರೆ ಅಂತಹ ಅಧಿಕಾರಿಯನ್ನು ಆ ಜಾಗದಲ್ಲಿಟ್ಟುಕೊಳ್ಳುವುದಿಲ್ಲ. ನಂಬಿಕೆ ಇಲ್ಲದ ಅಧಿಕಾರಿಯನ್ನು ಆ ಜಾಗದಲ್ಲಿಟ್ಟುಕೊಂಡು ಕೆಲಸ ಮಾಡುವುದು ಕಷ್ಟವಾಗುತ್ತದೆ....~
- ಸರ್ಕಾರ ನಡೆಸುವ ದೂರವಾಣಿ ಕದ್ದಾಲಿಕೆಯ ಕಳ್ಳಾಟದ ಒಳಮರ್ಮವನ್ನು ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಹೀಗೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾಗ ಇಡೀ ವಿಧಾನಸಭೆ ಮೈಯೆಲ್ಲಾ ಕಿವಿಯಾಗಿ ಕೇಳುತ್ತಿತ್ತು. ಹಗರಣದ ಕೇಂದ್ರ ವ್ಯಕ್ತಿಯಾಗಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಕೆಂಬಣ್ಣದ ಮುಖ ಕಪ್ಪಿಟ್ಟಿತ್ತು.
ಇದಕ್ಕಿಂತ ಮೊದಲು ಮಾತನಾಡಿದ್ದ ಹೆಗಡೆ `ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎರಡುವರೆ ವರ್ಷಗಳ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರದ ಒತ್ತಾಯದ ಮೇರೆಗೆ ಟೆಲಿಫೋನ್ ಕದ್ದಾಲಿಸಬೇಕಾದವರ ಪಟ್ಟಿಯನ್ನು ನವೀಕರಿಸಿದ್ದಕ್ಕೆ ನನ್ನ ಸಮ್ಮತಿ ಅಥವಾ ಒಂದು ಸಣ್ಣ ರುಜು ಇದೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಈಗಲೂ ಸಿದ್ಧ ಎಂದು ಜಾಣತನದಿಂದ ತಮ್ಮ `ನಿರಪರಾಧಿತನ~ವನ್ನು ಸಮರ್ಥಿಸಿಕೊಂಡಿದ್ದರು. ಜಾಣ ಹೆಗಡೆ ಅವರ ಬಾಯಿಯನ್ನು ಪಾಟೀಲರು ಸಾಕ್ಷ್ಯಾಧಾರದೊಡನೆ ಆಡಿದ ಮಾತುಗಳು ಮುಚ್ಚಿಸಿದ್ದವು.
ಇದು ಎಂಬತ್ತರ ದಶಕದ ಕೊನೆಭಾಗದಲ್ಲಿ ಕೋಲಾಹಲ ಎಬ್ಬಿಸಿದ್ದ ದೂರವಾಣಿ ಕದ್ದಾಲಿಕೆ ಹಗರಣದ ಕ್ಲೈಮಾಕ್ಸ್ ದೃಶ್ಯ (ಜೂನ್ 26,1990).ದೂರವಾಣಿ ಕದ್ದಾಲಿಕೆ ಆರೋಪದಿಂದಾಗಿ ರಾಮಕೃಷ್ಣ ಹೆಗಡೆ ಅವರು ಎರಡು ವರ್ಷ ಮೊದಲೇ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದರು, ನಂತರ ಚುನಾವಣೆಯಲ್ಲಿ ಜನತಾ ಪಕ್ಷವೂ ಸೋತ ಕಾರಣ ಹೆಗಡೆ ವಿರೋಧಪಕ್ಷದಲ್ಲಿದ್ದರು.  `ಪ್ರಜಾವಾಣಿ~ ಸೇರಿದ ಪ್ರಾರಂಭದ ದಿನಗಳಲ್ಲಿ ವಿಧಾನಪರಿಷತ್ ಕಲಾಪದ ವರದಿಗೆಂದು ಹೋಗಿದ್ದ ನಾನು ಕುತೂಹಲಕ್ಕೆಂದು ವಿಧಾನಸಭೆಗೆ ನುಗ್ಗಿ ಪತ್ರಕರ್ತರ ಗ್ಯಾಲರಿಯ ಮೂಲೆಯಲ್ಲಿ ಕೂತು ನೋಡಿದ ಈ ದೃಶ್ಯ ಇನ್ನೂ ಕಣ್ಣಿಗೆ ಕಟ್ಟಿದಂತಿದೆ, ಪಾಟೀಲರ ಮಾತುಗಳು ಈಗಷ್ಟೇ ಕೇಳಿದಂತಿದೆ. ಅವರು ಉತ್ತರ ನೀಡಲು ಏಳುವ ಮೊದಲು ವಿಧಾನಸಭೆಯ ಮೊಗಸಾಲೆಯಲ್ಲಿ ಹರಟೆ ಹೊಡೆಯುತ್ತಿದ್ದ ಪತ್ರಕರ್ತರು ಮತ್ತು ರಾಜಕಾರಣಿಗಳಲ್ಲಿ ಹೆಚ್ಚಿನವರು `ಪಾಟೀಲರು ಮತ್ತು ಹೆಗಡೆ ಲವ-ಕುಶರು, ಹಳೆ ದೋಸ್ತಿಯನ್ನು ಪಾಟೀಲರು ಕೈಬಿಡುವುದಿಲ್ಲ ನೋಡಿ, ಏನೋ ತಿಪ್ಪೆಸಾರಿಸಿ ಮುಗಿಸಿ ಬಿಡುತ್ತಾರೆ~ ಎಂದೇ ಹೇಳುತ್ತಿದ್ದರು. ಆ ಎಲ್ಲ ಆರೋಪಗಳಿಗೂ ಪಾಟೀಲರ ಮಾತುಗಳು ಉತ್ತರದಂತಿತ್ತು. `ರಾಮಕೃಷ್ಣ ಹೆಗಡೆ ಮತ್ತು ನನ್ನ ಸ್ನೇಹ 1956ರಿಂದ ಇದೆ. ವೈಯಕ್ತಿಕ ಮಟ್ಟದ ಸ್ನೇಹ ಹಿಂದಿನಿಂದಲೂ ಇದೆ, ಈಗಲೂ ಇದೆ. ಆದರೆ ನನ್ನ ಮತ್ತು ಅವರ ರಾಜಕೀಯ ಸ್ನೇಹ 1979ಕ್ಕೆ ಕೊನೆ ಆಯಿತು~ ಎಂಬ ಪೀಠಿಕೆಯೊಂದಿಗೆ ಪಾಟೀಲರು ಮಾತು ಪ್ರಾರಂಭಿಸಿದ್ದರು.
`...ಯಾರ ಫೋನ್ ಕದ್ದಾಲಿಸಲಾಗುವುದು ಎಂಬ ವಿವರ ಮುಖ್ಯಮಂತ್ರಿ ಹಾಗೂ ಗೂಢಚರ್ಯೆ ಇಲಾಖೆಯ ಮುಖ್ಯಸ್ಥರಿಗೆ ಮಾತ್ರ ಗೊತ್ತಿರುತ್ತದೆ. ಪದ್ಧತಿ ಪ್ರಕಾರ ಮುಖ್ಯಮಂತ್ರಿ ಸಲಹೆ ಮತ್ತು ಒಪ್ಪಿಗೆ ಮೇಲೆ ಕದ್ದಾಲಿಸುವ ಫೋನ್ ನಂಬರ್‌ಗಳ ಪಟ್ಟಿಗೆ ಹೊಸದಾಗಿ ನಂಬರು ಸೇರಿಸಬಹುದು ಅಥವಾ ಪಟ್ಟಿಯಿಂದ ತೆಗೆಸಬಹುದು. 1988ರಲ್ಲಿ ತಾವು ಆ ರೀತಿ ನಿರ್ದಿಷ್ಟ ವ್ಯಕ್ತಿಗಳ ಫೋನ್ ಕದ್ದಾಲಿಸಲು ಸಲಹೆ ಅಥವಾ ಒಪ್ಪಿಗೆ ಕೊಟ್ಟೇ ಇಲ್ಲವೆಂದು ಹೆಗಡೆಯವರು ಹೇಳಿದ್ದಾರೆ. ಸತ್ಯ ಗೊತ್ತಿರುವ ಇನ್ನೊಬ್ಬ ವ್ಯಕ್ತಿ ಆಗಿನ ಗೂಢಚರ್ಯೆ ಅಧಿಕಾರಿ ಎಂ.ಎಸ್.ರಘುರಾಮನ್, ಅವರು ಈಗ ಡಿಜಿಪಿಯಾಗಿದ್ದಾರೆ. ರಘುರಾಮನ್ ಪೊಲೀಸ್ ಇಲಾಖೆಯಲ್ಲಿ ಸಚ್ಚಾರಿತ್ರ್ಯದ ದಾಖಲೆ ಹೊಂದಿರುವವರು. 1988ರಲ್ಲಿ ಫೋನ್ ಕದ್ದಾಲಿಸಲು ಯಾರು ಹೇಳಿದ್ದರು ಎಂದು ಕೇಳಿ ನನ್ನ ಮುಖ್ಯಕಾರ‌್ಯದರ್ಶಿ ಮೂಲಕ ಪತ್ರ ಬರೆಸಿದ್ದೆ. ಅವರು ಕೊಟ್ಟಿರುವ ಉತ್ತರದಲ್ಲಿ `ಎಂದಿನ ಪದ್ಧತಿಯಂತೆ ಮುಖ್ಯಮಂತ್ರಿ ಸಲಹೆ ಮತ್ತು ಒಪ್ಪಿಗೆ ಪಡೆದೇ ಮಾಡಿದ್ದೇನೆ~ ಎಂದು ಲಿಖಿತ ಉತ್ತರ ನೀಡಿದ್ದಾರೆ ಎಂದ ವೀರೇಂದ್ರ ಪಾಟೀಲ್ ಅವರು, ರಘುರಾಮನ್ ಪತ್ರವನ್ನು ಸದನದಲ್ಲಿ ಮಂಡಿಸಿದರು. ಅಲ್ಲಿಗೆ ರಾಮಕೃಷ್ಣ ಹೆಗಡೆ ಅವರ ಬತ್ತಳಿಕೆ ಬರಿದಾಗಿತ್ತು.
ಪಾಟೀಲರು ಮುಂದುವರಿದು ಹೇಳುತ್ತಾರೆ `....ನಮ್ಮಲ್ಲಿ ಬಹಳ ಮಂದಿ ಹೊಸ ಶಾಸಕರು ಬಂದಿದ್ದಾರೆ, ಟೆಲಿಫೋನ್ ಕದ್ದಾಲಿಸುವುದಾದರೆ ನಾವು ಹೇಗೆ ಕೆಲಸಮಾಡಬೇಕು ಎಂದು ಅವರು ಕೇಳುತ್ತಿದ್ದಾರೆ. ಈ ದೃಷ್ಟಿಯಿಂದ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡು ಮೂರು ದಿನಗಳಲ್ಲೇ ಗೂಢಚರ್ಯೆ ವಿಭಾಗದ ಮುಖ್ಯಸ್ಥರನ್ನು ಕರೆಸಿ ಮಾತನಾಡಿದೆ. ಇನ್ನು ಮುಂದೆ ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರ ಟೆಲಿಫೋನ್ ಕದ್ದಾಲಿಸಬಾರದೆಂದು ಆದೇಶ ನೀಡಿದೆ. ಒಮ್ಮೆ ಬಾಯಿಮಾತಿನಲ್ಲಿ ಹೇಳಿದ ನಂತರ ಮುಖ್ಯ ಕಾರ‌್ಯದರ್ಶಿ, ಗೃಹ ಇಲಾಖೆ ಕಮಿಷನರ್ ಈ ಬಗ್ಗೆ ಪತ್ರ ಬರೆದಿದ್ದರು. ಗೃಹ ಕಮಿಷನರ್ ಈಗಿನ ಐಜಿಪಿ ಇಂಟೆಲಿಜೆನ್ಸ್ ಶ್ರಿನಿವಾಸಲು ಅವರಿಗೆ ತಿಳಿಸಿದ್ದಾರೆ. ನನ್ನ ಅಧಿಕಾರವಧಿಯಲ್ಲಿ ಯಾವುದೇ ರಾಜಕೀಯ ಇಲ್ಲವೇ ಸಾರ್ವಜನಿಕ ವ್ಯಕ್ತಿಯ ಟೆಲಿಫೋನ್‌ಗಳನ್ನು ಕದ್ದು ಕೇಳಲಾಯಿತು ಎಂಬ ದೂರಿಗೆ ಅವಕಾಶ ಇರಬಾರದೆಂದು ಹೀಗೆ ಮಾಡಿದೆ~ ಪಾಟೀಲರು ಅಧಿಕಾರದಲ್ಲಿದ್ದಷ್ಟು ದಿನ ನುಡಿದಂತೆ ನಡೆದಿದ್ದರು. ಆದರೆ ಕದ್ದಾಲಿಕೆ ಪಟ್ಟಿಗೆ ಸಮ್ಮತಿ ಸಹಿ ಸಾಬೀತಾದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುವೆ ಎಂದು ಸವಾಲು ಹಾಕಿದ್ದ ಹೆಗಡೆ ಮಾತ್ರ ನುಡಿದಂತೆ ನಡೆಯಲಿಲ್ಲ.
ಇವೆಲ್ಲವನ್ನೂ ಗಂಭೀರವದನರಾಗಿ ಸಭಾಧ್ಯಕ್ಷರ ಸ್ಥಾನದಲ್ಲಿ ಕೂತು ಕೇಳುತ್ತಿದ್ದವರು ಈಗಿನ ವಿದೇಶಾಂಗ ವ್ಯವಹಾರ ಖಾತೆ ಸಚಿವ ಎಸ್.ಎಂ.ಕೃಷ್ಣ. ಒಮ್ಮೆ ಚರ್ಚೆಯ ಮಧ್ಯೆ ಪ್ರವೇಶಿಸಿದ ಕೃಷ್ಣ ಅವರು  `ಹತ್ತು ವರ್ಷದ ಮೇಲೂ ನಮ್ಮ ಮಾತು ನಮಗೆ ತಿರುಗುಬಾಣವಾಗದಂತೆ ಇರಬೇಕು~ ಎಂದಿದ್ದರು. ಅದೇ ವಿಧಾನಸಭೆಯಲ್ಲಿನ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಇನ್ನೊಬ್ಬ ನಾಯಕರು ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. `ನಮ್ಮ ರಾಜಕೀಯ ಚದುರಂಗದ ಆಟಕ್ಕೆ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಪ್ರವೃತ್ತಿಗೆ ಕೊನೆ ಹೇಳಬೇಕು ಮುಖ್ಯಮಂತ್ರಿಗಳೇ~ ಎಂದು ಒಂದು ಹಂತದಲ್ಲಿ ಅವರು ಕೂಗಿ ಹೇಳಿದ್ದರು. ಯಡಿಯೂರಪ್ಪನವರು ಹಾಗೆ ಹೇಳಲು ಕಾರಣ ಇತ್ತು. ಆರ್. ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗ  ವಿರೋಧಪಕ್ಷಗಳ ನಾಯಕರಾಗಿದ್ದ ಬಿ.ಎಸ್.ಯಡಿಯೂಪ್ಪ, ಡಿ.ಎಚ್.ಶಂಕರಮೂರ್ತಿ ಸೇರಿದಂತೆ ನಗರದ ಹೆಸರಾಂತ ವಕೀಲರು ಹಾಗೂ ವರ್ತಕರ ಫೋನ್‌ಗಳನ್ನು ಕದ್ದು ಕೇಳಲಾಗಿತ್ತು. ಆಗ ಗುಪ್ತದಳದ ಡಿಐಜಿ ಆಗಿದ್ದವರು ಡಿ.ಆರ್.ಕಾರ್ತಿಕೇಯನ್. ಈ ವಿಷಯವನ್ನು ಕೂಡಾ ಸದನದಲ್ಲಿ ನೆನೆಪು ಮಾಡಿಕೊಂಡದ್ದು ರಾಮಕೃಷ್ಣ ಹೆಗಡೆ.
`...ಹತ್ತುವರ್ಷದ ಮೇಲೂ ನಮ್ಮ ಮಾತು ನಮಗೆ ತಿರುಗುಬಾಣವಾಗದಂತೆ ಇರಬೇಕು...~ ಎಂದು ಕೃಷ್ಣ ಹೇಳಿದ್ದ ಮಾತುಗಳನ್ನು ಯಡಿಯೂರಪ್ಪನವರು ಕೇಳಿಸಿಕೊಂಡಿದ್ದರೋ ಇಲ್ಲವೋ ಗೊತ್ತಿಲ್ಲ.
*           *              *           *                 
ತೀರಾ ಹಳೆಯದಾದ ಫ್ಲಾಷ್‌ಬ್ಯಾಕ್ ಬೇಡ ಎಂದಾದರೆ ಇತ್ತೀಚಿನ ದಿನಗಳಿಗೆ ಬರೋಣ. `ಆಹಾರಕ್ಕಾಗಿ ತೈಲ~ ಎಂಬ ವಿಶ್ವಸಂಸ್ಥೆಯ ಕಾರ‌್ಯಕ್ರಮದ ಅನುಷ್ಠಾನದಲ್ಲಿ ನಡೆದಿದ್ದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಯುಪಿಎ ಸರ್ಕಾರ ನೇಮಿಸಿದ್ದ ಆರ್.ಎಸ್.ಪಾಠಕ್ ಆಯೋಗದ ವರದಿಯನ್ನು ಒಂದು ಟಿವಿ ಚಾನೆಲ್ ಸರ್ಕಾರಕ್ಕಿಂತ ಮೊದಲೇ ಬಹಿರಂಗಪಡಿಸಿತ್ತು. ಚಾನೆಲ್‌ನಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ ಸಮಯದಲ್ಲಿ  ವರದಿ ಸಲ್ಲಿಕೆಗಾಗಿ ಹೋಗಿದ್ದ ಆಯೋಗದ ಅಧ್ಯಕ್ಷರಾದ ಪಾಠಕ್ ಸಾಹೇಬರು ಇನ್ನೂ ಪ್ರಧಾನಿ ಕಚೇರಿಯಲ್ಲಿಯೇ ಇದ್ದರು. `ಆಹಾರಕ್ಕಾಗಿ ತೈಲ~ ಯೋಜನೆಯ ಹಗರಣದಲ್ಲಿ ಆಗಿನ ವಿದೇಶಾಂಗ ವ್ಯವಹಾರ ಖಾತೆ ಸಚಿವ ನಟವರ್‌ಸಿಂಗ್ ಪಾತ್ರ ಇದೆ ಎನ್ನುವುದು ಪಾಠಕ್ ಆಯೋಗದ ತನಿಖೆಯ ಮುಖ್ಯಾಂಶ. ಈ ಹಿನ್ನೆಲೆಯಲ್ಲಿ ಸಚಿವ ನಟವರ್‌ಸಿಂಗ್ ರಾಜೀನಾಮೆ ನೀಡಬೇಕೆಂದು ಬಿಜೆಪಿ  ಲೋಕಸಭೆಯಲ್ಲಿ ಪಟ್ಟು ಹಿಡಿದು ಕಲಾಪ ನಡೆಸಲು ಅವಕಾಶ ನೀಡಿರಲಿಲ್ಲ.
ಕೊನೆಗೆ ನಟವರ್‌ಸಿಂಗ್ ವಿದೇಶಾಂಗ ವ್ಯವಹಾರದ ಖಾತೆಯನ್ನು ಕಳೆದುಕೊಳ್ಳಬೇಕಾಯಿತು. ತನಿಖಾ ವರದಿ ಸೋರಿಕೆಯಿಂದಾಗಿ ಅದರ ಪಾವಿತ್ರ್ಯ ನಾಶವಾಯಿತೆಂದು ಧನಂಜಯಕುಮಾರ್ ಮತ್ತಿತರ ಬಿಜೆಪಿ ನಾಯಕರು ಈಗ ಹೇಳುತ್ತಿದ್ದಾರೆ. ಸೋರಿಕೆಯಿಂದಾಗಿ ಪಾಠಕ್ ತನಿಖಾ ವರದಿಯ ಪಾವಿತ್ರ್ಯ ನಾಶವಾಗಿರಲಿಲ್ಲವೇ?
ತನಿಖಾ ವರದಿಗಳ ಸೋರಿಕೆ ದೇಶದಲ್ಲಿಯಾಗಲಿ, ವಿದೇಶದಲ್ಲಿಯಾಗಲಿ ಹೊಸದೇನಲ್ಲ. ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹತ್ಯೆ ಬಗ್ಗೆ ತನಿಖೆ ನಡೆಸಲು ಆಗಿನ ಸರ್ಕಾರ ಎಂ.ಸಿ.ಜೈನ್ ನೇತೃತ್ವದ ಆಯೋಗ ನೇಮಿಸಿತ್ತು. ಆರುವರ್ಷಗಳ ಕಾಲ ತನಿಖೆ ನಡೆಸಿದ್ದ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಸುವ ಪೂರ್ವದಲ್ಲಿಯೇ ಮೊದಲು ತಮಿಳು ವಾರಪತ್ರಿಕೆಯೊಂದರಲ್ಲಿ ನಂತರ `ಇಂಡಿಯಾ ಟುಡೇ~ ವಾರ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಸಂಯುಕ್ತರಂಗ ಸರ್ಕಾರವನ್ನು ಉರುಳಿಸಲು ರಾಜೀವ್ ನಿಷ್ಠಾವಂತರೇ ಈ ಕೆಲಸ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ರಾಜೀವ್‌ಗಾಂಧಿ ಹತ್ಯೆಯ ಯೋಜನೆಗೆ ಡಿಎಂಕೆ ಸಹಕಾರ ಇತ್ತು ಎಂದು ಜೈನ್ ಆಯೋಗ ಹೇಳಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜತೆಗೂಡಿ ಬಿಜೆಪಿ ಕೂಡಾ ಸರ್ಕಾರದ ವಿರುದ್ಧ ಕೂಗು ಹಾಕಿತ್ತು. ವರದಿ ಸೋರಿಕೆಯಾದರೆ ಪಾವಿತ್ರ್ಯ ಇಲ್ಲ ಎಂದಾದರೆ ಆಗ ಬಿಜೆಪಿ ಯಾಕೆ ಗದ್ದಲ ಮಾಡಬೇಕಾಗಿತ್ತು? ಕೊನೆಗೆ ಮಿತ್ರಪಕ್ಷವಾದ ಡಿಎಂಕೆ ಪಕ್ಷವನ್ನು ಕೈಬಿಡಲಾಗದೆ ಆಗಿನ ಪ್ರಧಾನಿ ಐ.ಕೆ.ಗುಜ್ರಾಲ್ ಅವರು ರಾಜೀನಾಮೆ ನೀಡಿದ್ದರು. ಇವೆಲ್ಲವೂ ನಡೆಯುತ್ತಿರುವಾಗ ಧನಂಜಯಕುಮಾರ್ ಲೋಕಸಭಾ ಸದಸ್ಯರಾಗಿ ಅಲ್ಲಿಯೇ ಇದ್ದರು.
ಬಾಬ್ರಿ ಮಸೀದಿ ಧ್ವಂಸದ ಘಟನೆ ಬಗ್ಗೆ ಎಂ.ಎಸ್.ಲಿಬರ‌್ಹಾನ್ ಏಕಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಸರ್ಕಾರದ ಬಳಿ ಇರುವಾಗಲೇ ಪತ್ರಿಕೆಗಳಿಗೆ ಸೋರಿಕೆಯಾಗಿತ್ತು. ಅಟಲಬಿಹಾರಿ ವಾಜಪೇಯಿ,ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಷಿ,ಕಲ್ಯಾಣ್‌ಸಿಂಗ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಬಾಬ್ರಿಮಸೀದಿ ಧ್ವಂಸದ ಕಾರ‌್ಯಾಚರಣೆಯಲ್ಲಿ ಭಾಗಿಗಳು ಎಂದು ಆಯೋಗ ವರದಿ ನೀಡಿತ್ತು. ಪಾಠಕ್ ಆಯೋಗದ ವರದಿ ಸೋರಿಕೆಯಾದರೂ ಅದರಲ್ಲಿನ ಅಂಶಗಳನ್ನು ಒಪ್ಪಿಕೊಂಡು ಸಚಿವ ನಟವರ್‌ಸಿಂಗ್ ರಾಜೀನಾಮೆಗೆ ಒತ್ತಾಯಿಸಿದ್ದ ಬಿಜೆಪಿ, ಲಿಬರ‌್ಹಾನ್ ಆಯೋಗದ ವರದಿ ಸೋರಿಕೆಯಾದಾಗ ಮಾತ್ರ ಮೊದಲು ಸೋರಿಕೆ ಬಗ್ಗೆ ತನಿಖೆ ನಡೆಸಲಿ ಎಂದು ಲೋಕಸಭೆಯಲ್ಲಿ ಗದ್ದಲ ನಡೆಸಿತ್ತು.
ಈ ಎರಡು ಫ್ಲ್ಯಾಷ್‌ಬ್ಯಾಕ್‌ಗಳ ಒಟ್ಟು ಸಾರಾಂಶ:
1.ಸಾಮಾನ್ಯವಾಗಿ ರಾಜ್ಯದಲ್ಲಿ ರಾಜ್ಯ ಸರ್ಕಾರದ ಗುಪ್ತಚರ ವಿಭಾಗವೇ ದೂರವಾಣಿ ಕದ್ದಾಲಿಕೆ ನಡೆಸುತ್ತದೆ ಮತ್ತು ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆಯಾಗಿರುತ್ತಾರೆ. ಆದ್ದರಿಂದ ಅವರು ರಾಜೀನಾಮೆ ನೀಡಬೇಕಾಗುತ್ತದೆ.
2.ತನಿಖಾ ಆಯೋಗದ ವರದಿ ಸೋರಿಕೆಯಾದರೂ ಅದು ಪಾವಿತ್ರ್ಯತೆ ಕಳೆದುಕೊಳ್ಳುವುದಿಲ್ಲ.

Monday, July 18, 2011

ಭಗವದ್ಗೀತೆಯನ್ನು ಹೀಗೂ ಓದಬಹುದಲ್ಲವೇ?

`ಭಗವದ್ಗೀತೆ ಅಭಿಯಾನ ವಿರೋಧಿಸುವವರು ದೇಶ ಬಿಟ್ಟು ಹೋಗಲಿ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅಪ್ಪಣೆ ಕೊಡಿಸಿದ್ದಾರೆ.ಭಗವದ್ಗೀತೆ ಅಭಿಯಾನದಿಂದ ಕೆಟ್ಟದ್ದೇನಾಗಿದೆ ಎಂದು ಯಾರಾದರೂ ಪ್ರಶ್ನಿಸಿದರೆ ಅದಕ್ಕೆ ಉತ್ತರದಂತಿದೆ ಸಚಿವ ಕಾಗೇರಿ ಅವರ ಮಾತುಗಳು.

ಸಜ್ಜನ  ಮತ್ತು ಪ್ರಜ್ಞಾವಂತರೆನಿಸಿಕೊಂಡ ಕಾಗೇರಿ ಅವರನ್ನೇ ಈ ರೀತಿ  ಮನುಷ್ಯವಿರೋಧಿಯಂತೆ ಮಾತನಾಡಲು ಪ್ರೇರೇಪಿಸಿದ `ಭಗವದ್ಗೀತಾ ಅಭಿಯಾನ~ ಎಂತಹ ವಿದ್ಯಾರ್ಥಿಗಳನ್ನು ಸೃಷ್ಟಿಸಲಿದೆಯೋ ಗೊತ್ತಿಲ್ಲ.

ಧರ್ಮ ಅಫೀಮು ಇದ್ದಂತೆ ಎಂದು ಹೇಳಿರುವುದು ಇದಕ್ಕೇ ಇರಬೇಕು, ಯಾಕೆಂದರೆ ಒಮ್ಮಮ್ಮೆ ಪ್ರಜ್ಞಾವಂತರೆನಿಸಿಕೊಂಡವರು ಕೂಡಾ ಧಾರ್ಮಿಕ ಉನ್ಮಾದದ ಸುಳಿಗೆ ಸಿಕ್ಕಿ ಹಾದಿ ತಪ್ಪಿಬಿಡುತ್ತಾರೆ.

ಈ ದೇಶದ ಸಂವಿಧಾನಕ್ಕೆ ಬದ್ಧನಾಗಿರುತ್ತೇನೆ ಎಂದು ಪ್ರಮಾಣ ಮಾಡಿ ಸಚಿವರಾದ ಕಾಗೇರಿ ಅವರಿಗೆ ತಾನಾಡಿದ ಮಾತುಗಳು ಅದಕ್ಕೆ ವಿರುದ್ಧವಾಗಿದೆ ಎಂದು ತಿಳಿಯದಷ್ಟು ಧರ್ಮದ ಮಂಪರು ಆವರಿಸಿಕೊಂಡು ಬಿಟ್ಟಿದೆ.

ಸದ್ಯ ತಮ್ಮ ಪಕ್ಷಕ್ಕೆ ಕರ್ನಾಟಕದಲ್ಲಿ ಮಾತ್ರ ಆಡಳಿತ ನಡೆಸಲು ಜನಾದೇಶ ಇದೆ ಎನ್ನುವುದನ್ನೂ ಅವರು ಮರೆತಂತಿದೆ. ಅದು ನೆನೆಪಿದ್ದರೆ ರಾಜ್ಯ ಬಿಟ್ಟು ತೊಲಗಿ ಎಂದಾದರೂ ಅವರು ಹೇಳುತ್ತಿದ್ದರೇನೋ?
ಈಗಿನ ವಿವಾದ ಭಗವದ್ಗೀತೆಯ ಧಾರ್ಮಿಕ ಪಾವಿತ್ರ್ಯ, ಜನರ ನಂಬಿಕೆ ಇಲ್ಲವೇ ಕೃತಿಯ ವಿಶ್ವಾಸಾರ್ಹತೆಗೆ ಸಂಬಂಧಿಸಿದ್ದಲ್ಲ, ಅದು ಈ ಕಾರ‌್ಯಕ್ರಮದ ಹಿಂದಿನ ಉದ್ದೇಶ ಮತ್ತು ಪರಿಣಾಮಕ್ಕೆ ಸಂಬಂಧಿಸಿದ್ದು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಏನು ಕಲಿಸಬೇಕೆನ್ನುವುದನ್ನು ಮುಖ್ಯಮಂತ್ರಿಗಳೋ, ಶಿಕ್ಷಣ ಸಚಿವರೋ ತಮ್ಮ ಮನೆಗಳಲ್ಲಿ ಕೂತು ನಿರ್ಧರಿಸಲಾಗುವುದಿಲ್ಲ.

ಅದಕ್ಕಾಗಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಇದೆ. ಅದರಲ್ಲಿನ ತಜ್ಞರು ಚರ್ಚಿಸಿ ನೀಡುವ ವರದಿಯನ್ನು ಆಧರಿಸಿ ಶಾಲೆಗಳಲ್ಲಿ ಬೋಧಿಸುವ ಪಠ್ಯ ಮತ್ತು ಪಠ್ಯೇತರ ವಿಷಯಗಳನ್ನು ನಿರ್ಧರಿಸಲಾಗುತ್ತದೆ.
ನಾಳೆ ಯಾವನೋ ಒಬ್ಬ `ಪವಾಡ ಮಾಡುವುದನ್ನು ಕಲಿಸುತ್ತೇನೆ~ ಎಂದೋ, `ಸರ್ಕಸ್ ಮಾಡುವುದಕ್ಕೆ ತರಬೇತಿ ನೀಡುತ್ತೇನೆ~ ಎಂದೋ ಬಂದರೆ ಅಂತಹವರಿಗೆ ಶಾಲೆಗಳಲ್ಲಿ ಅವಕಾಶ ನೀಡಲು ಸಾಧ್ಯವಾಗುವುದಿಲ್ಲ.

ಕೇಂದ್ರದಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದಾಗ ಆಗಿನ ಮಾನವಸಂಪನ್ಮೂಲ ಅಭಿವೃದ್ದಿ ಖಾತೆ ಸಚಿವ ಮುರಳಿ ಮನೋಹರ ಜೋಷಿ ಅವರು ಇಂತಹದ್ದೇ ದುಸ್ಸಾಹಸ ಮಾಡಿದ್ದರು. ಕೇಂದ್ರ ಶೈಕ್ಷಣಿಕ ಸಲಹಾ ಮಂಡಳಿಯನ್ನು ಪುನರ್‌ರಚಿಸಲು ಹೋಗದೆ ಎನ್‌ಸಿಇಆರ್‌ಟಿ ಮೂಲಕ ಪಠ್ಯಪುಸ್ತಕಗಳನ್ನು ತಿದ್ದುವ (ತಿರುಚುವ) ಪ್ರಯತ್ನ ನಡೆಸಿದ್ದರು.
ರಾಜ್ಯದಲ್ಲಿ ಮೂರುವರ್ಷಗಳ ಅಧಿಕಾರದ ನಂತರ ಇಲ್ಲಿನ ಶಿಕ್ಷಣ ಸಚಿವರು ಈ ಕೆಲಸ ಪ್ರಾರಂಭಿಸಿದ್ದಾರೆ. ತನ್ನೂರಿನ ಮಠದ ಸ್ವಾಮಿಯೊಬ್ಬರು `ಭಗವದ್ಗೀತೆ ಅಭಿಯಾನ ಮಾಡುತ್ತೇನೆ~ ಎಂದು ಹೇಳಿದಾಗ ಅದಕ್ಕೆ ಕಣ್ಣುಮುಚ್ಚಿ ಆದೇಶ ಹೊರಡಿಸಿ ಜನರ ತೆರಿಗೆ ಹಣವನ್ನು ಸಮರ್ಪಿಸಿದ್ದಾರೆ. ಆ ಕಾರ‌್ಯಕ್ರಮದ ಹಿಂದಿನ ನಿಜವಾದ ಉದ್ದೇಶವೇನು?
ಅದರ ಸ್ವರೂಪವೇನು? ಅದರಿಂದ ವಿದ್ಯಾರ್ಥಿಗಳ ಮೇಲೆ ಆಗುವ ಪರಿಣಾಮಗಳೇನು? ಉದ್ಭವಿಸಬಹುದಾದ ಹೊಸ ಸಮಸ್ಯೆಗಳೇನು? ಇವೆಲ್ಲವನ್ನು ಒಬ್ಬ ಜವಾಬ್ದಾರಿಯತ ಸಚಿವನಾಗಿ ತಿಳಿದುಕೊಳ್ಳುವ ಕಷ್ಟವನ್ನು ಅವರು ತೆಗೆದುಕೊಂಡಿಲ್ಲ. ತಾನು ನಂಬಿರುವ ತತ್ವಗಳಿಗೆ ನಿಷ್ಠನಾಗಿರುವ ಸ್ವಯಂಸೇವಕನಂತೆ ವರ್ತಿಸಿದ್ದಾರೆ.

ಕಾರ‌್ಯಕ್ರಮಕ್ಕೆ ಅನುಮತಿ ನೀಡಿರುವುದು ಮಾತ್ರವಲ್ಲ, ಅದರ ರಕ್ಷಣೆಗೆ  ಲಾಠಿ ಹಿಡಿದು ನಿಂತಿದ್ದಾರೆ. ಧರ್ಮ ಪ್ರೇರಿತ ಅಭಿಯಾನಗಳು ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿ ಉಳಿಯುವುದಿಲ್ಲ. ನಾಳೆ ಮುಸ್ಲಿಂ ಇಲ್ಲವೇ ಕ್ರೈಸ್ತ ಧರ್ಮಗುರುಗಳು ಬಂದು ಕುರಾನ್ ಇಲ್ಲವೇ ಬೈಬಲ್ `ಕಂಠ ಪಾಠ ಮಾಡಿಸುತ್ತೇವೆ~ ಎಂದು ಬಂದರೆ ನಿರಾಕರಿಸುವುದು ಹೇಗೆ?
ಭಗವದ್ಗೀತೆಯೂ ಸೇರಿದಂತೆ ಪುರಾಣಗಳನ್ನು ವಿದ್ಯಾರ್ಥಿಗಳಿಗೆ ಓದಿಸಿದರೆ ತಪ್ಪೇನು ಎಂಬ ಪ್ರಶ್ನೆ ಸಹಜವಾದುದು. `ಪುರಾಣ ಕಥೆಗಳೆಂದರೆ ಜನರ ಕನಸು ಮತ್ತು ದುಃಖಗಳು. ಅವರು ಅತ್ಯಂತ ಆಳದಲ್ಲಿ ಆನಂದಿಸಿದ ಮತ್ತು ಅತ್ಯಮೂಲ್ಯ ಎಂದು ತಿಳಿದುಕೊಂಡ ಆಸೆ-ಆಕಾಂಕ್ಷೆಗಳು, ಬದುಕಿನ ಭಾಗವಾಗಿರುವ ಕೊನೆಯೇ ಇಲ್ಲದ ವಿಷಾದಗಳು, ಸ್ಥಳೀಯ ಮತ್ತು ಲೌಕಿಕ ಇತಿಹಾಸ-ಎಲ್ಲವೂ ಪುರಾಣಗಳಲ್ಲಿ ಅಳಿಸಲಾಗದಂತಹ ದಾಖಲೆಗಳಾಗಿರುತ್ತವೆ~ ಎಂದು ದೇಶ ಕಂಡ ಅಪರೂಪದ ಚಿಂತಕ ರಾಮಮನೋಹರ ಲೋಹಿಯಾ ಹೇಳಿದ್ದರು.

ರಾಮ, ಕೃಷ್ಣ ಮತ್ತು ಶಿವನ ಬಗ್ಗೆ ಲೋಹಿಯಾ ಬರೆದಿರುವ ಪ್ರಬಂಧ ಈ ದೇಶದ ಆಸ್ತಿಕ-ನಾಸ್ತಿಕ ಮಹಾಶಯರೆಲ್ಲರೂ ಕಡ್ಡಾಯವಾಗಿ ಓದಲೇಬೇಕಾದುದು. ಈ ತ್ರಿಮೂರ್ತಿಗಳನ್ನು `ಭಾರತದ ಮಹಾ ಕನಸು ಮತ್ತು ದುಃಖದ ಪ್ರತೀಕ~ ಎನ್ನುತ್ತಾರೆ ಅವರು.

`ಆದ್ದರಿಂದಲೇ ಇವರ ಕಥೆಗಳನ್ನು ಏಕಸೂತ್ರಕ್ಕೆ ಹೊಂದಿಸಿಕೊಳ್ಳುವುದು ಇಲ್ಲವೇ ಅವರ ಜೀವನದ ಜತೆ ವೈಫಲ್ಯವನ್ನೇ ಕಾಣದ ನೈತಿಕತೆಯನ್ನು ಹೆಣೆಯುವುದು ಮತ್ತು ಸುಳ್ಳು ಇಲ್ಲವೇ ಅಸಂಭವವೆಂದು ಕಾಣುವುದೆಲ್ಲವನ್ನೂ ಕಿತ್ತು ಬಿಸಾಡಲು ಹೊರಟರೆ ಜೀವನದಲ್ಲಿ ತರ್ಕವೊಂದನ್ನು ಬಿಟ್ಟು ಉಳಿದೆಲ್ಲವನ್ನೂ ದೋಚಿದಂತಾಗುತ್ತದೆ~ ಎಂದು ಹೇಳಿದ್ದರು ರಾಮ ಮನೋಹರ ಲೋಹಿಯಾ.
ಭಗವದ್ಗೀತೆ ಮಾತ್ರವಲ್ಲ, ಮಹಾಭಾರತ, ರಾಮಾಯಣ, ಕುರಾನ್, ಬೈಬಲ್ ಎಲ್ಲವನ್ನೂ ಎಲ್ಲರೂ ಓದಲೇ ಬೇಕು. ಆದರೆ ಅದನ್ನು ಹೇಗೆ ಓದಬೇಕೆಂಬುದೇ ನಮ್ಮ ಮುಂದಿರುವ ಮುಖ್ಯ ಪ್ರಶ್ನೆ.
ಆಸ್ತಿಕರು ಪುರಾಣವೆಂದು ನಂಬುವ ಮಹಾಭಾರತ ಎಂಬ ಮಹಾಕಾವ್ಯದ ಒಂದು ಭಾಗ ಭಗವದ್ಗೀತೆ. ಇದು ಯುದ್ಧಭೂಮಿಯಲ್ಲಿ ಅರ್ಜುನನಿಗೆ ಕೃಷ್ಣ ಬೋಧಿಸಿದ ಗೀತೆ. ಪುರಾಣವೇ ಹಾಗೆ, ಅದಕ್ಕೆ ಇತಿಹಾಸಕ್ಕೆ ಅಗತ್ಯವಾದ ಅಧ್ಯಯನದ ಚೌಕಟ್ಟು ಇಲ್ಲವೇ ಪುರಾವೆಗಳ ನೆಲೆಗಟ್ಟು ಬೇಕಾಗುವುದಿಲ್ಲ.
ಅದನ್ನು ತಮ್ಮ  ಆಲೋಚನೆಗೆ ತಕ್ಕಂತೆ ಕಟ್ಟುತ್ತಾ, ಬಿಚ್ಚುತ್ತಾ, ವ್ಯಾಖ್ಯಾನಿಸುತ್ತಾ, ಮರುವ್ಯಾಖ್ಯಾನಿಸುತ್ತಾ ಹೋಗಬಹುದು. ಪುರಾಣಗಳ ವ್ಯಾಖ್ಯಾನ ಅದನ್ನು ವ್ಯಾಖ್ಯಾನಿಸುವವರ ನಿಲುವುಗಳನ್ನು ಅವಲಂಬಿಸಿರುವುದರಿಂದ ನಮ್ಮ ನಡುವೆ ಇರುವುದು ಒಂದು ರಾಮಾಯಣ, ಒಂದು ಮಹಾಭಾರತ ಅಲ್ಲ. ಪರಸ್ಪರ ಭಿನ್ನವಾದ ಈ ಕೃತಿಯ ಹಲವು ರೂಪಗಳು ಜನಪ್ರಿಯವಾಗಿವೆ.
ಭಗವದ್ಗೀತೆಯನ್ನು ಪವಿತ್ರಗ್ರಂಥವೆಂದು ಕುರುಡಾಗಿ ನಂಬುವವರು ಇದ್ದ ಹಾಗೆ, ಹಿಂಸೆಯನ್ನು ಸಮರ್ಥಿಸುವ, ಚಾತುರ್ವರ್ಣ ಪದ್ಧತಿಯನ್ನು ಒಪ್ಪಿಕೊಂಡಿರುವ, ಊಳಿಗಮಾನ್ಯ ವ್ಯವಸ್ಥೆಯನ್ನು ಪ್ರತಿಪಾದಿಸುವ, ಮನುಷ್ಯ ಸಂಬಂಧಗಳನ್ನು ನಿರಾಕರಿಸುವ, ಶ್ರಮಕ್ಕೆ ಪ್ರತಿಫಲ ನಿರೀಕ್ಷಿಸಬಾರದೆಂದು ಹೇಳುವ ಭಗವದ್ಗೀತೆ  ಜನವಿರೋಧಿಯಾದುದು ಎಂದು ಹೇಳುವವರೂ ಇದ್ದಾರೆ.

ಮಹಾಭಾರತ ಎನ್ನುವುದು ಶ್ರಿಕೃಷ್ಣನೆಂಬ ಅನಾರ್ಯ ಏಕಾಂಗಿಯಾಗಿ ಕೇವಲ ಬುದ್ಧಿಬಲದಿಂದ ಆರ್ಯ ಸಾಮ್ರಾಜ್ಯವನ್ನು ನಾಶ ಮಾಡಿದ ಕತೆ ಎನ್ನುವವರೂ ಇದ್ದಾರೆ. ಆ ಮಹಾಭಾರತದ ಭಾಗವಾಗಿರುವ ಭಗವದ್ಗೀತೆಯನ್ನು ಕಂಠಪಾಠ ಮಾಡುವ ವಿದ್ಯಾರ್ಥಿಗಳಿಗೆ ಇದನ್ನೆಲ್ಲ ತಿಳಿದುಕೊಳ್ಳುವ ಅವಕಾಶ ಖಂಡಿತ ಇರುವುದಿಲ್ಲ.
ಈ ದೇಶದಲ್ಲಿ ಆರ್ಯರ ರಾಜಕೀಯ ಮತ್ತು ಸಾಂಸ್ಕೃತಿಕ ಸ್ವಾಮ್ಯ ಸ್ಥಾಪನೆಯ ಮೊದಲ ಕಥನವೆಂದು ಬಗೆಯಲಾಗಿರುವ ರಾಮಾಯಣದ ಕಾಲ ನಾಲ್ಕು ಸಾವಿರ ವರ್ಷಗಳಷ್ಟು ಹಿಂದಿನದೆಂದು ಊಹಿಸಲಾಗಿದೆ.
ಸುಮಾರು ಮೂರು ಸಾವಿರ ವರ್ಷಗಳ ಹಿಂದಿನದೆಂದು ಊಹಿಸಲಾಗಿರುವ ಮಹಾಭಾರತದ ಕಥನ ಕಾಲದಲ್ಲಿ ಭಾರತದಲ್ಲಿ ಆರ್ಯರು ಮತ್ತು ಅನಾರ್ಯರ ಸಾಂಸ್ಕೃತಿಕ ಸೆಣಸಾಟ ಇನ್ನೂ ನಡೆಯುತ್ತಿದ್ದರೂ ರಾಮಾಯಣದಲ್ಲಿ ಚಿತ್ರಿತರಾಗಿದ್ದ ರಕ್ಕಸ ಕುಲಜರ ಕ್ರೌರ್ಯದ ವರ್ಣನೆ ಮಹಾಭಾರತದಲ್ಲಿ ತನ್ನ ತೀವ್ರತೆಯನ್ನು ಕಳೆದುಕೊಂಡಿತ್ತು.

ಅಷ್ಟರಲ್ಲಿ ಅನಾರ್ಯ ಸಮೂಹವನ್ನು ಆಳಬಲ್ಲ ಕ್ಷತ್ರಿಯ ವರ್ಗವನ್ನು ಆರ್ಯರು ರೂಪಿಸಿದ್ದರು. ಆರ್ಯರ ಆಕ್ರಮಣಕ್ಕೆ ದ್ರಾವಿಡರ ಪ್ರತಿರೋಧ ಕಡಿಮೆಯಾಗಿ ಅವರು, ಆರ್ಯರು ನಿರೂಪಿಸಿದ ವರ್ಣದ ಚೌಕಟ್ಟಿನಲ್ಲಿ ಬದುಕಲಾರಂಭಿಸಿದ್ದರು. ಇದರಿಂದಾಗಿ ಮಹಾಭಾರತದಲ್ಲಿ ಕ್ರೂರಿಗಳಾದ ರಕ್ಕಸರ ಚಿತ್ರ ಅಷ್ಟಾಗಿ ಕಾಣುವುದಿಲ್ಲ. ಬದಲಾಗಿ ವೃತ್ತಿಮೂಲವಾದ ಜಾತಿವಾರು ವಿಂಗಡಣೆ ಕಾಣಸಿಗುತ್ತದೆ.
ಇಂತಹ ವಿಂಗಡಣೆಯಲ್ಲಿ ಗೊಲ್ಲರ ಕುಲದಲ್ಲಿ ಹುಟ್ಟಿದ ಕೃಷ್ಣ ಮೂಲತಃ ಒಬ್ಬ ದ್ರಾವಿಡ. ಪುರಾಣದಲ್ಲಿ ಚಿತ್ರಿಸಿರುವಂತೆ ಅವನದು ನೀಲವರ್ಣ ಅಂದರೆ ಅವನೊಬ್ಬ ಕರಿಯ. ಆಗಿನ ಕಾಲದ ಆರ್ಯರಂತೆ ಆಜಾನುಬಾಹು ಅಲ್ಲ, ಅವನೊಬ್ಬ ಕುಳ್ಳ. ಗೊಲ್ಲರ ಕುಲದಲ್ಲಿ ಹುಟ್ಟಿ ಈ ಕರಿಯ, ಕುಳ್ಳ ಕೃಷ್ಣ ಆಗಿನ ಆರ್ಯ ಪ್ರಭುತ್ವದ ಬುಡವನ್ನೇ ಅಲುಗಾಡಿಸಿದ್ದ.

ಆರ್ಯ ಮೂಲವಾದ ಕುರುಕುಲದಲ್ಲಿ ಕೃಷ್ಣ ಹುಟ್ಟಿಸಿದ ದಾಯಾದಿ ಸಮರ ಎಲ್ಲ ಕಾಲಕ್ಕೂ ಪ್ರಸ್ತುತವೆನಿಸುವ ಒಂದು ಅಪರೂಪದ ರಾಜಕೀಯ ತಂತ್ರವೆನ್ನಬಹುದು. ಕೌರವರು ಮತ್ತು ಪಾಂಡವರ ನಡುವೆ ಸ್ನೇಹ ಸಂಬಂಧವನ್ನು ಬೆಳೆಸಿಕೊಂಡ ಕೃಷ್ಣ, ಆರ್ಯಪುತ್ರರೊಳಗೆ ದಾಯಾದಿ ಮತ್ಸರವನ್ನು ಹುಟ್ಟಿಸಿ ಅದು ಕ್ರಮೇಣ ದ್ವೇಷವಾಗಿ ಬೆಳೆಯುವಂತೆ ಮಾಡಿದ. ಆ ಮೂಲಕ ಈ ಕ್ಷತ್ರಿಯರ ನಡುವೆ ನಡೆದ ಮಹಾಸಮರದಲ್ಲಿ ಆರ್ಯ ಪ್ರಭುತ್ವವೇ ನಶಿಸಿಹೋಗಬಹುದೆಂಬ ಲೆಕ್ಕಾಚಾರ ಕೃಷ್ಣನಿಗಿದ್ದಿರಬೇಕು.

ಹೀಗೆ ಆಗುವ ಆರ್ಯ ಕುಲಜರ ಅವನತಿ ದ್ರಾವಿಡ ಪ್ರಭುತ್ವಕ್ಕೆ ದಾರಿ ಮಾಡುವುದೆಂಬ ನಿರೀಕ್ಷೆ ಆತನಿಗಿತ್ತೋ ಏನೋ? ಕೌರವ ಮತ್ತು ಪಾಂಡವರೊಳಗಿನ ದೀರ್ಘಾವಧಿಯ ಆಂತರಿಕ ಕಲಹದ ಅವಧಿಯಲ್ಲಿ ಕೃಷ್ಣ ದ್ರಾವಿಡ ಶಕ್ತಿಯ ಪ್ರಭಾವವಲಯವೊಂದನ್ನು ಸೃಷ್ಟಿಸಿದ್ದ. ಅನಾರ್ಯರಿಗೆ ಕ್ಷತ್ರಿಯ ಅಂತಸ್ತು ನಿರಾಕರಿಸಲ್ಪಟ್ಟಿರುವ ಕಾಲವದು.

ಅಂತಹ ಕಾಲದಲ್ಲಿಯೂ ಕೌರವ-ಪಾಂಡವರ ಕಲಹದಿಂದಾಗಿ ಭಾರತದ ಎಲ್ಲೆಡೆ ಅನೇಕ ಮಂದಿ ದ್ರಾವಿಡರು ಕ್ಷತ್ರಿಯ ಪಟ್ಟಕ್ಕೇರಿದ್ದರು. ಮಹಾಭಾರತದಲ್ಲಿ ನಮಗೆ ಇಂತಹ ಅನೇಕ ನಿದರ್ಶನಗಳು ಸಿಗುತ್ತವೆ. ಆರ್ಯಕ್ಷತ್ರಿಯರು ಮತ್ತು ದ್ರಾವಿಡ ರಾಜ ವಂಶಗಳ ನಡುವೆ ವೈವಾಹಿಕ ಸಂಬಂಧಗಳಿಗೆ ಕೃಷ್ಣ ಚಾಲನೆ ಕೊಟ್ಟಿದ್ದ.

ಮಹಾಭಾರತ ಯುದ್ಧದಲ್ಲಿ ದ್ರಾವಿಡ ರಾಜರ ಸಹಭಾಗಿತ್ವವಾಗದಂತೆಯೂ ಕೃಷ್ಣ ನೋಡಿಕೊಂಡಿದ್ದ. ಗೋಪಾಲಕರ ರಾಜನಾದ ಅಣ್ಣ ಬಲರಾಮ ಯಾದವ ಸೇನೆಯನ್ನು ಕುರುಕ್ಷೇತ್ರಕ್ಕೆ ಕರೆದುಕೊಂಡು ಬಾರದಂತೆ ಕೃಷ್ಣ ಹೂಡಿದ ತಂತ್ರದ ಪ್ರಸ್ತಾಪ ಮಹಾಭಾರತ ಕಾವ್ಯದಲ್ಲಿದೆ.

ಕೌರವರು-ಪಾಂಡವರ ನಡುವಿನ ಪ್ರತಿಷ್ಠೆಯ ಮಹಾಸಮರದಲ್ಲಿ ತಟಸ್ಥರಾಗಿ ಉಳಿದವರೆಲ್ಲರೂ ದ್ರಾವಿಡ ರಾಜರು. ಹೀಗೆ ದ್ರಾವಿಡ ರಾಜರನ್ನು ತಟಸ್ಥರಾಗಿ ಉಳಿಸಿ ಕುರುಕ್ಷೇತ್ರವನ್ನು ಆರ್ಯ-ಕ್ಷತ್ರಿಯರ ರುದ್ರಭೂಮಿಯಾಗಿ ಮಾಡಿದ್ದ. ಆ ಕಾಲದಲ್ಲಿ ಆರ್ಯ ಪ್ರಭುತ್ವ ಸೃಷ್ಟಿಸಿದ್ದ ವರ್ಣಾಶ್ರಮ ಧರ್ಮವನ್ನು ಶಿಥಿಲಗೊಳಿಸಿ ವರ್ಣಸಂಕರಕ್ಕೆ ದಾರಿ ಮಾಡಿಕೊಡುವುದು ಕೃಷ್ಣನ ಪರಮೋದ್ದೇಶವಾಗಿತ್ತೆನ್ನಬಹುದು. 
ಈ ದೃಷ್ಟಿಯಿಂದ ಕೃಷ್ಣ ಒಬ್ಬ ಕ್ರಾಂತಿಕಾರಿ ಸಮಾಜ ಸುಧಾರಕನಂತೆ ಕಾಣುತ್ತಾನೆ. ಈ ವಿಚಾರಗಳ ಬೆಳಕಲ್ಲಿ ಕೃಷ್ಣನನ್ನು ನೋಡಿದರೆ ಆತ ಬೋಧಿಸಿದ ಭಗವದ್ಗೀತೆಯ ಶ್ಲೋಕಗಳು ಬೇರೆಯೇ ಅರ್ಥಗಳನ್ನು ಹೊರಡಿಸುತ್ತವೆ.
ಭಗವದ್ಗೀತೆ ಅಭಿಯಾನಕ್ಕೆ ಹೊರಟಿರುವ ಸೋಂದಾ ಸ್ವರ್ಣವಲ್ಲಿ ಮಠದ ಸ್ವಾಮಿಗಳು ಖಂಡಿತ ಭಗವದ್ಗೀತೆಯ ಶ್ಲೋಕಗಳನ್ನು ಈ ರೀತಿ ವೈಚಾರಿಕ ಹಿನ್ನೆಲೆಯಲ್ಲಿ ವ್ಯಾಖ್ಯಾನ ಮಾಡುವ ಸಾಹಸ ಮಾಡಲಾರರು. ವರ್ಣಾಶ್ರಮ ವ್ಯವಸ್ಥೆಯನ್ನು ಪ್ರತಿಪಾದಿಸುವ ಧಾರ್ಮಿಕ ನಾಯಕರಿಂದ ಇದನ್ನು ನಿರೀಕ್ಷಿಸಲೂ ಸಾಧ್ಯ ಇಲ್ಲ.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳನ್ನು ಕಂಠಪಾಠ ಮಾಡಿಸುವ ಮೂಲಕ ಹಿಂದೂ ಧರ್ಮದ ಅಂಧಾಭಿಮಾನಿಗಳನ್ನು ಬೆಳೆಸುವುದಷ್ಟೇ ಅವರ ಉದ್ದೇಶವಾಗಿರಬಹುದು.
ಕುರುಕ್ಷೇತ್ರದಲ್ಲಿ ಅರ್ಜುನ `ಯುದ್ಧ ಮಾಡಲಾರೆ~ ಎಂದಾಗ `ಯುದ್ಧವೇ ನಿನ್ನ ಕರ್ತವ್ಯ, ಅದರಿಂದ ವಿಮುಖನಾಗದಿರು~ ಎಂದು ಅವನನ್ನು ಹುರಿದುಂಬಿಸಿ ಭಗವದ್ಗೀತೆಯನ್ನು ಬೋಧಿಸಿದ್ದ ಕೃಷ್ಣ ಕೊನೆಗೆ `ನಾನು ಹೇಳಿದ್ದನ್ನು ವಿಮರ್ಶಿಸಿ ನೋಡು, ಬಳಿಕ ನಿನ್ನ ಇಷ್ಟವಿದ್ದಂತೆ ಮಾಡು~ (ವಿಮೃಶ್ಯೈತದಶೇಷೇಣ, ಯಥೇಚ್ಛಸಿ ತಥಾ ಕುರು) ಎಂದು ಹೇಳಿದ್ದ.

ಕನಿಷ್ಠ, ಭಗವದ್ಗೀತೆಯಲ್ಲಿನ ಈ ಸಾಲುಗಳನ್ನಾದರೂ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಓದಿದ್ದರೆ ಭಗವದ್ಗೀತೆ ಅಭಿಯಾನದ ಹೆಸರಲ್ಲಿ ತಮ್ಮ ಪರಿವಾರದ ಅಜೆಂಡಾವನ್ನು ಅಮಾಯಕ ವಿದ್ಯಾರ್ಥಿಗಳ ಮೇಲೆ ಹೇರಲು ಹೋಗುತ್ತಿರಲಿಲ್ಲ. 

Monday, June 27, 2011

ನುಂಗಲಾರದಷ್ಟನ್ನು ಬಾಯಲ್ಲಿ ಹಾಕಿಕೊಂಡರೆ ಅಣ್ಣಾ?

ಅಣ್ಣಾ ಹಜಾರೆ ಅವರು ನುಂಗಲಾರದಷ್ಟನ್ನು ಬಾಯಲ್ಲಿ ಹಾಕಿಕೊಂಡುಬಿಟ್ಟಿದ್ದಾರೆ.ಉಗಿಯುವಂತಿಲ್ಲ, ನುಂಗುವಂತಿಲ್ಲ. ಈ ಸಂಕಟದಿಂದ ಪಾರಾಗಬೇಕಾದರೆ ಅವರು ಯಾವುದಾದರೂ ಒಂದು ನಿರ್ಧಾರ ತೆಗೆದುಕೊಳ್ಳಲೇಬೇಕಾಗಿದೆ.
ನಾಗರಿಕ ಸಮಿತಿ ರಚಿಸಿರುವ ಜನಲೋಕಪಾಲ ಮಸೂದೆಯಲ್ಲಿನ ಎಲ್ಲ ಅಂಶಗಳನ್ನು  ಕೇಂದ್ರ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಈಗ ಸ್ಪಷ್ಟವಾಗಿದೆ.

ಆದ್ದರಿಂದ ನುಡಿದಂತೆಯೇ ನಡೆಯಬೇಕೆಂದು ಹೊರಟರೆ ಆಗಸ್ಟ್ ಹದಿನಾರರಿಂದ ಅಣ್ಣಾ ಹಜಾರೆ ಅವರು ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದು ಅನಿವಾರ‌್ಯವಾಗಬಹುದು.
ಉಳಿದಿರುವ ಇನ್ನೊಂದು ಆಯ್ಕೆ ಉಪವಾಸ ಸತ್ಯಾಗ್ರಹ ಕೈಬಿಟ್ಟು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಜನಜಾಗೃತಿಗೆ ಹೊರಡುತ್ತೇನೆ ಎಂದು ಘೋಷಿಸಿ ಯುದ್ದಭೂಮಿಯಿಂದ ಗೌರವಪೂರ್ವಕವಾಗಿ ನಿರ್ಗಮಿಸುವುದು.
ಸರ್ಕಾರದ ಮುಂದೆ ಕೂಡಾ ಇರುವುದು ಎರಡೇ ಆಯ್ಕೆ. ಒಂದೋ ನಾಗರಿಕ ಸಮಿತಿ ಹೇಳಿರುವುದನ್ನೆಲ್ಲ ಬಾಯಿಮುಚ್ಚಿಕೊಂಡು ಒಪ್ಪಿಕೊಳ್ಳುವುದು, ಇಲ್ಲವೇ ಮಾತುಕತೆಯ ಮಾರ್ಗವನ್ನು ಕೈಬಿಟ್ಟು ನೇರವಾಗಿ ಸಂಘರ್ಷಕ್ಕಿಳಿಯುವುದು. ಅಣ್ಣಾ ಹಜಾರೆ ಅವರಿಗೆ ಇರುವಷ್ಟು ಗೊಂದಲ ಸರ್ಕಾರಕ್ಕೆ ಇದ್ದ ಹಾಗಿಲ್ಲ.
ಅದು ಎರಡನೇ ಆಯ್ಕೆಗೆ  ಸಿದ್ದತೆ ನಡೆಸಿದಂತಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಕೂಗುಮಾರಿಯಾಗಿರುವ ದಿಗ್ವಿಜಯ್‌ಸಿಂಗ್ ಸಹೋದ್ಯೋಗಿಗಳ ಜತೆಗೂಡಿ ಆಗಲೇ ಈ ಕೆಲಸ ಪ್ರಾರಂಭಿಸಿದ್ದಾರೆ.
ಅಣ್ಣಾ ಹಜಾರೆ ಅವರ ಹಠಮಾರಿತನ ಮತ್ತು ಅವರ ಸಂಗಡಿಗರ ಬಾಯಿಬಡುಕತನ ಅತಿಯಾಯಿತು ಎನ್ನುವ ಜನರ ಗೊಣಗಾಟವನ್ನು ಕೂಡಾ ಕಾಂಗ್ರೆಸ್ ನಾಯಕರು ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳಿಂದಾಗಿ ಭ್ರಷ್ಟ ವ್ಯವಸ್ಥೆಯಿಂದ ರೋಸಿಹೋಗಿರುವ ಅಸಹಾಯಕ ಜನರನ್ನು ಪಾರುಮಾಡಲು ಅವತಾರ ಎತ್ತಿ ಬಂದವರಂತೆ ಕಾಣಿಸಿಕೊಂಡ ಅಣ್ಣಾ ಹಜಾರೆ ಅವರು ಬಹುಬೇಗ ನೇಪಥ್ಯಕ್ಕೆ ಸರಿದು ಹೋಗುತ್ತಿದ್ದಾರೆಯೇ? ಇಂತಹ ಅನುಮಾನ ಅವರ ಅಭಿಮಾನಿಗಳನ್ನೂ ಕಾಡತೊಡಗಿದೆ.
ಒಂದೊಮ್ಮೆ ಅಣ್ಣಾ ಹಜಾರೆ `ಉಪವಾಸ ಸತ್ಯಾಗ್ರಹ ಪ್ರಾರಂಭಿಸಿಯೇ ತೀರುತ್ತೇನೆ~ ಎಂದು ಹೊರಟರೆ ಏನಾಗಬಹುದು? ಮೊದಲು ಕೇಂದ್ರ ಸರ್ಕಾರ ಅದನ್ನು ತಡೆಯಲು ಹತ್ತಾರು ಅಡ್ಡಿ-ಆತಂಕಗಳನ್ನು ಒಡ್ಡಬಹುದು (ಅನುಮತಿ ನಿರಾಕರಣೆ, ಇನ್ನಷ್ಟು ಆರೋಪಗಳ ಸುರಿಮಳೆ..ಇತ್ಯಾದಿ).
ಅವೆಲ್ಲವನ್ನೂ ಮೀರಿ ಉಪವಾಸ ಪ್ರಾರಂಭಿಸಿದರೆ ಒಂದೆರಡು ದಿನಗಳಲ್ಲಿಯೇ ಸರ್ಕಾರ ಅವರನ್ನು ಬಲಾತ್ಕಾರವಾಗಿ ಎಬ್ಬಿಸಿ ಆಸ್ಪತ್ರೆಗೆ ಸೇರಿಸಬಹುದು.

ಕಳೆದ ಬಾರಿಯ ಉಪವಾಸದ ನಂತರ ಅವರ ತಪಾಸಣೆ ನಡೆಸಿದ್ದ ವೈದ್ಯರು  ಮತ್ತೆ ಉಪವಾಸ ನಡೆಸುವುದು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ಹೇಳಿರುವುದನ್ನೇ ಸರ್ಕಾರ ತನ್ನ ಸಮರ್ಥನೆಗೆ ಬಳಸಬಹುದು.

ಈ ರೀತಿ ಅಣ್ಣಾ ಹಜಾರೆ ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿದರೆ ಈ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವವರು ಯಾರು? ಶಾಂತಿಭೂಷಣ್? ಪ್ರಶಾಂತ್ ಭೂಷಣ್? ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ? ಕಿರಣ್ ಬೇಡಿ? ಸ್ವಾಮಿ ಅಗ್ನಿವೇಶ್ ಅವರು ಈಗಾಗಲೇ ಮೆತ್ತಗೆ ದೂರ ಸರಿಯುತ್ತಿರುವುದರಿಂದ ಅವರ ಹೆಸರೂ ಹೇಳುವಂತಿಲ್ಲ.
ಬೇರೆ ಯಾರು? ಈಜಿಪ್ಟ್, ಟ್ಯುನೇಷಿಯಾದಂತೆ ಜನ ದಂಗೆ ಎದ್ದು ಬೀದಿಬೀದಿಗಳಲ್ಲಿ ಸೇರಲಿದ್ದಾರೆ ಎಂದೇನಾದರೂ ಅಣ್ಣಾ ಹಜಾರೆ ಮತ್ತು ಸಂಗಡಿಗರು ತಿಳಿದುಕೊಂಡಿದ್ದಾರೆಯೇ?
ಬದ್ಧತೆ ಮತ್ತು ಪ್ರಾಮಾಣಿಕತೆ ಎರಡರ ದೃಷ್ಟಿಯಿಂದಲೂ ಅಣ್ಣಾ ಹಜಾರೆ ಅವರನ್ನು ಬಾಬಾ ರಾಮ್‌ದೇವ್ ಜತೆ  ಹೋಲಿಸುವುದು ಸಾಧ್ಯ ಇಲ್ಲ ಎನ್ನುವುದು ನಿಜ.

ಆದರೆ ಸಂಘಟನೆಯ ದೃಷ್ಟಿಯಿಂದ ಅಣ್ಣಾ ಹಜಾರೆ ಅವರಿಗಿಂತ ಬಾಬಾ ರಾಮ್‌ದೇವ್ ಎಷ್ಟೋ ಪಾಲು ಹೆಚ್ಚು ಬಲಶಾಲಿಯಾಗಿದ್ದರು.  ದೇಶದಾದ್ಯಂತ ಪತಂಜಲಿ ಯೋಗಪೀಠದ ನೂರಾರು ಶಾಖೆಗಳಿವೆ.
ಯೋಗ ಶಿಬಿರಗಳು ಮತ್ತು ಟಿವಿ ಚಾನೆಲ್ ಮೂಲಕ ಕೋಟ್ಯಂತರ ಜನರ ಜತೆ ಅವರು ಸಂಪರ್ಕ ಸಾಧಿಸಿದ್ದಾರೆ. ಲಕ್ಷಾಂತರ ಮಂದಿ ಅವರ ಯೋಗ ಚಿಕಿತ್ಸೆಯ ಫಲಾನುಭವಿಗಳೂ ಆಗಿದ್ದಾರೆ.
ಇಷ್ಟಾಗಿಯೂ ಸರ್ಕಾರ ಅಮಾನುಷ ರೀತಿಯಲ್ಲಿ ಅವರ ಮೇಲೆ ಎರಗಿಬಿದ್ದಾಗ ಟಿವಿ ಕ್ಯಾಮೆರಾಗಳ ಮುಂದೆ ಒಂದಷ್ಟು ಮಹಿಳೆಯರು ಕಣ್ಣೀರು ಸುರಿಸಿದ್ದನ್ನು ಹೊರತುಪಡಿಸಿದರೆ ಬೇರೆ ಯಾವ ಅನಾಹುತವೂ ಆಗಲಿಲ್ಲ. ನಾಳೆ ಅಣ್ಣಾ ಹಜಾರೆ ಅವರನ್ನು ಬಂಧಿಸಿದರೆ ದೇಶದ ಜನ ಸಿಡಿದೆದ್ದು ಬೀದಿಗೆ ಇಳಿಯಬಹುದೇ?
ಅಣ್ಣಾ ಹಜಾರೆ ಅವರು ಆಗಲೇ ಸರ್ಕಾರ ಒಡ್ಡಿರುವ ಬೋನಿನಲ್ಲಿ ಬಿದ್ದಿದ್ದಾರೆ. ತಾನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖವಾಡ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರದಿಂದ ಸಿಟ್ಟಾದ ಅಣ್ಣಾ ಹಜಾರೆ ಆ ಎರಡೂ ಸಂಘಟನೆಗಳ ಜತೆ ತನಗೆ ಸಂಬಂಧ ಇರುವುದನ್ನು ನಿರಾಕರಿಸಿರುವುದು ಮಾತ್ರವಲ್ಲ, ಆ ಬಗ್ಗೆ ಪುರಾವೆಗಳಿದ್ದರೆ ಒದಗಿಸಿ ಎಂದು ಸವಾಲು ಹಾಕಿದ್ದಾರೆ.

ಅಂದರೆ ಬಿಜೆಪಿ ಜತೆ ಅವರು ಮುಂದೆಯೂ ಸೇರಿಕೊಳ್ಳುವುದಿಲ್ಲ ಎಂದೇ ಅರ್ಥ. ಬೆನ್ನ ಹಿಂದೆ ಮೀಸಲಾತಿ ವಿರೋಧಿ ಫಲಕಗಳನ್ನು ಬಚ್ಚಿಟ್ಟುಕೊಂಡು ಛದ್ಮವೇಷದಲ್ಲಿ ಸತ್ಯಾಗ್ರಹದಲ್ಲಿ ಪಾಲ್ಗೊಂಡವರು, ಕೂಡಾ ಅಣ್ಣಾ ಹಜಾರೆ ಅವರ ಈ ಹೇಳಿಕೆ ನಂತರ ದೂರ ಸರಿಯತೊಡಗಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧವೇ ಅವರು ಹೋರಾಟ ನಡೆಸುತ್ತಿದ್ದಾರೆ, ವಿರೋಧಪಕ್ಷವಾದ ಬಿಜೆಪಿ ಜತೆ ಸೇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಬಿಎಸ್‌ಪಿ, ಡಿಎಂಕೆ, ಸಮಾಜವಾದಿ ಪಕ್ಷ, ಆರ್‌ಜೆಡಿ, ಎನ್‌ಸಿಪಿ, ಶಿವಸೇನೆ ಮೊದಲಾದ ಪ್ರಾದೇಶಿಕ ಪಕ್ಷಗಳ ನಾಯಕರು ಒಂದಲ್ಲ ಒಂದು ಭ್ರಷ್ಟಾಚಾರದ ಹಗರಣಗಳಲ್ಲಿ ಆರೋಪಿಯಾಗಿದ್ದಾರೆ.

ಉಳಿದವು ಎಡಪಕ್ಷಗಳು. ಎರಡು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ದಣಿವಾರಿಸಿಕೊಳ್ಳುತ್ತಿರುವ ಆ ಪಕ್ಷಗಳು ಅಣ್ಣಾ ಹಜಾರೆ ಅವರ ಬೆಂಬಲಕ್ಕೆ ನಿಲ್ಲುವುದು ಅಷ್ಟರಲ್ಲೇ ಇದೆ. ಬೇರೆ ಯಾವ ಶಕ್ತಿಗಳನ್ನು ನಂಬಿ ಅಣ್ಣಾ ಹಜಾರೆ ಮತ್ತು ಸಂಗಡಿಗರು ಚುನಾಯಿತ ಸರ್ಕಾರವೊಂದಕ್ಕೆ ಸವಾಲು ಹಾಕುತ್ತಿದ್ದಾರೆ? ಜನ ಎಂಬ ಅಮೂರ್ತ ಶಕ್ತಿಯನ್ನೇ?
ಸಮಸ್ಯೆ ಅಣ್ಣಾ ಹಜಾರೆ ಅವರ ಚಳವಳಿಯ ಮೂಲದಲ್ಲಿಯೇ ಇದೆ. `ಪ್ರಜಾಪ್ರಭುತ್ವ ಎಂದರೆ ಜನರಿಂದ ಆಯ್ಕೆಯಾದ ನಂತರ ಮುಂದಿನ ಚುನಾವಣೆಯ ವರೆಗೆ ನಿರಂಕುಶವಾಗಿ ಆಡಳಿತ ನಡೆಸಿಕೊಂಡು ಹೋಗುವುದಲ್ಲ, ಚುನಾಯಿತ ಸರ್ಕಾರ ಹಾದಿ ತಪ್ಪಿದಾಗ ಪ್ರಶ್ನಿಸುವ, ಎಚ್ಚರಿಸುವ, ಮಣಿಸುವ ಮತ್ತು ಸರಿಯಾದ ದಾರಿ ತೋರಿಸುವ ಅಧಿಕಾರ ನಾಗರಿಕರಿಗೆ ಇದೆ. ಅದನ್ನೇ ನಾವು ಮಾಡುತ್ತಿದ್ದೇವೆ~ ಎನ್ನುವ ನಾಗರಿಕ  ಸಮಿತಿಯ ವಾದ ಸರಿಯಾಗಿಯೇ ಇದೆ.

ಇಂತಹ ನಾಗರಿಕ ಹೋರಾಟಗಳು ರಾಜಕೀಯಾತೀತವಾಗಿ ಸಾಮಾಜಿಕ ಚೌಕಟ್ಟಿನಲ್ಲಿದ್ದಾಗ ಅದಕ್ಕೆ ಮಿತಿಗಳು ಇರುತ್ತವೆ.ತಮ್ಮ ಸಾಮರ್ಥ್ಯದ ಅರಿವು ಹೋರಾಟದಲ್ಲಿ ತೊಡಗಿರುವವರಿಗೂ ಗೊತ್ತಿರುತ್ತದೆ.
ಆದ್ದರಿಂದಲೇ ಅವು ನೇರವಾಗಿ ಸರ್ಕಾರದ ಜತೆ ಸಂಘರ್ಷಕ್ಕಿಳಿಯದೆ ಒತ್ತಡ ಹೇರುವ ಮಟ್ಟಕ್ಕೆ ಮಾತ್ರ ತಮ್ಮ ಹೋರಾಟವನ್ನು ಸೀಮಿತಗೊಳಿಸುತ್ತವೆ. ಮೇಧಾ ಪಾಟ್ಕರ್ ನೇತೃತ್ವದ `ನರ್ಮದಾ ಬಚಾವೋ ಆಂದೋಲನ~ ಇದಕ್ಕೆ ಉತ್ತಮ ಉದಾಹರಣೆ.
`ನಮ್ಮ ಬೇಡಿಕೆಯನ್ನು ತಿಂಗಳೊಳಗೆ ಈಡೇರಿಸದಿದ್ದರೆ ಜಂತರ್‌ಮಂತರ್‌ನಲ್ಲಿ ಆಮರಣ ಉಪವಾಸ ಮಾಡಿ ಪ್ರಾಣಬಿಡುತ್ತೇನೆ~ಎಂದು ಮೇಧಾ ಪಾಟ್ಕರ್ ಎಂದೂ ಹೇಳಿರಲಿಲ್ಲ. ಅಂದ ಮಾತ್ರಕ್ಕೆ ಅವರ ಸಾಧನೆ ಕಡೆಗಣಿಸುವಂತಹದ್ದಲ್ಲ. ಅವಸರ ಮಾಡಿದ್ದರೆ ಚಳವಳಿಯ ಮೂಲಕ ಈಗಿನಷ್ಟನ್ನೂ ಸಾಧಿಸಲು ಅವರಿಂದ ಸಾಧ್ಯವಾಗುತ್ತಿರಲಿಲ್ಲವೇನೋ?
ಪ್ರತಿದಿನ ದೇಶಾದ್ಯಂತ  ಪ್ರತಿಭಟನೆ, ಚಳವಳಿ, ಸತ್ಯಾಗ್ರಹ, ಧರಣಿ, ಜಾಥಾಗಳು ನಡೆಯುತ್ತಲೇ ಇರುತ್ತವೆ. ಪ್ರಜಾಪ್ರಭುತ್ವದ ಜೀವಂತಿಕೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಇವುಗಳು ನೆರವಾಗುತ್ತವೆ.

ಇಂತಹ ಸಾಮಾಜಿಕ ಹೋರಾಟಗಳು ತಮ್ಮ ಘೋಷಿತ ಉದ್ದೇಶ ಸಾಧನೆಯ ಜತೆಗೆ  ರಾಜಕೀಯ ಬದಲಾವಣೆಗೂ ಕೊಡುಗೆಗಳನ್ನು ನೀಡುತ್ತಾ ಹೋಗುತ್ತವೆ. ಅದು ನಿಧಾನವಾಗಿ ನಡೆಯುವ ಪ್ರಕ್ರಿಯೆ, ಅವಸರದ್ದಲ್ಲ.
ಸ್ವತಂತ್ರ ಭಾರತದಲ್ಲಿ ಸರ್ಕಾರವೊಂದು ಪ್ರಜೆಗಳ ಕೈಗೆ ಕೊಟ್ಟಿರುವ ದೊಡ್ಡ ಅಸ್ತ್ರ ಮಾಹಿತಿ ಹಕ್ಕು ಕಾನೂನು. ಪರಿಣಾಮದ ದೃಷ್ಟಿಯಿಂದ ಇದು ಲೋಕಪಾಲರ ನೇಮಕಕ್ಕಿಂತಲೂ ದೊಡ್ಡ ಅಸ್ತ್ರ. ಈ ಕಾನೂನು ಅನುಷ್ಠಾನದ ಹಿಂದೆ ಅಣ್ಣಾ ಹಜಾರೆ, ಅರವಿಂದ ಕೇಜ್ರಿವಾಲಾ ಮೊದಲಾದವರು ನಡೆಸಿರುವ ಹೋರಾಟ ಇದೆ ಎನ್ನುವುದು ನಿಜ.
ಆದರೆ ಮಾಹಿತಿ ಪಡೆಯುವ ಹಕ್ಕಿಗಾಗಿ ಹೋರಾಟ ಮೊದಲು ಪ್ರಾರಂಭವಾಗಿದ್ದು ತೊಂಬತ್ತರ ದಶಕದಲ್ಲಿ. ರಾಜಸ್ತಾನದ ರಾಜ್‌ಸಾಮಾಂಡ್ ಜಿಲ್ಲೆಯಲ್ಲಿ ಕಾರ್ಮಿಕರು ಮತ್ತು ರೈತರು ಕೂಡಿ 1990ರಲ್ಲಿ `ಮಜ್ದೂರ್ ಕಿಸಾನ್ ಶಕ್ತಿ ಸಂಘಟನ್ (ಎಂಕೆಎಸ್‌ಎಸ್) ಕಟ್ಟಿ ಮೊದಲ ಬಾರಿ ಮಾಹಿತಿ ಹಕ್ಕಿಗಾಗಿ ಒತ್ತಾಯಿಸಿದ್ದರು.
1996ರಲ್ಲಿ ರಾಜಸ್ತಾನದ ಬೇವಾರ್ ಪಟ್ಟಣದಲ್ಲಿ `ಮಾಹಿತಿ ಹಕ್ಕು, ಬದುಕುವ ಹಕ್ಕು~ ಎಂಬ ಘೋಷಣೆಯೊಂದಿಗೆ ಜನ 40 ದಿನಗಳ ಧರಣಿ ಸತ್ಯಾಗ್ರಹ ನಡೆಸಿದ್ದರು. ಅಂತಿಮವಾಗಿ ಆ ಕಾನೂನು ಅನುಷ್ಠಾನಕ್ಕೆ ಬಂದದ್ದು 2005ರಲ್ಲಿ.
ಆದರೆ ಲೋಕಾಯುಕ್ತ-ಲೋಕಪಾಲರ ನೇಮಕಕ್ಕಾಗಿ ಇತ್ತೀಚಿನ ವರೆಗೆ ಯಾವುದೇ ರಾಜ್ಯ ಇಲ್ಲವೇ ರಾಷ್ಟ್ರಮಟ್ಟದಲ್ಲಿ ಸಣ್ಣ ಪ್ರಮಾಣದ ಸತ್ಯಾಗ್ರಹ ಚಳವಳಿಗಳೂ  ನಡೆದಿಲ್ಲ. ಈ ಕಾರಣದಿಂದಾಗಿಯೇ ಅಣ್ಣಾ ಹಜಾರೆ ಮತ್ತು ಬೆಂಬಲಿಗರು  ಅವಸರದ ಕ್ರಾಂತಿಗೆ ಹೊರಟಿರುವಂತೆ ಕಾಣುತ್ತಿದ್ದಾರೆ.
ಆಗಲೇ ಕೆಲವರು ಈ ಹೋರಾಟವನ್ನು ಎಪ್ಪತ್ತರ ದಶಕದಲ್ಲಿ ನಡೆದ ಜೆಪಿ ಚಳವಳಿಗೆ ಹೋಲಿಸತೊಡಗಿದ್ದಾರೆ. ಕೆಲವರು ಇನ್ನಷ್ಟು ಹಿಂದೆ ಹೋಗಿ ಸ್ವಾತಂತ್ರ್ಯ ಚಳವಳಿಗೆ ಹೋಲಿಸುತ್ತಿದ್ದಾರೆ. ಇವೆರಡೂ ಶುದ್ಧ ರಾಜಕೀಯ ಚಳವಳಿಗಳು, ಅದರಲ್ಲಿ ಯಾವ ಮುಚ್ಚುಮರೆಯೂ ಇರಲಿಲ್ಲ.
ಗಾಂಧೀಜಿಯಾಗಲಿ,  ಜೆಪಿಯಾಗಲಿ ತಮ್ಮನ್ನು ಸಮಾಜಸೇವಕರೆಂದು ಕರೆದುಕೊಂಡಿರಲಿಲ್ಲ. ರಾಜಕಾರಣಿಗಳು ತಾವು ಕುಳಿತ ವೇದಿಕೆ ಹತ್ತಬಾರದೆಂದು ಅವರ‌್ಯಾರೂ ಹೇಳಿರಲಿಲ್ಲ.
ಅವರು  ಅಪ್ಪಟ ರಾಜಕಾರಣಿಗಳಾಗಿದ್ದರು, ರಾಜಕೀಯದಲ್ಲಿಯೂ ಉಳಿದುಕೊಂಡಿರುವ ಒಂದಷ್ಟು ಸಜ್ಜನರನ್ನು ಸೇರಿಸಿಕೊಂಡು ಚಳವಳಿಯನ್ನು ಮುನ್ನಡೆಸಿದ್ದರು. ಸರ್ವಾಧಿಕಾರಿ ಇಂದಿರಾಗಾಂಧಿಯವರ ವಿರುದ್ಧದ ಹೋರಾಟದ ಬಗ್ಗೆ ಮಾತ್ರವಲ್ಲ, ಆಕೆಯ ಪತನದ ನಂತರದ ಪರ್ಯಾಯದ ಬಗ್ಗೆಯೂ ಅವರಿಗೆ ಸ್ಪಷ್ಟತೆ ಇತ್ತು.
ದುರದೃಷ್ಟವಶಾತ್ ಅಣ್ಣಾ ಹಜಾರೆ ಅವರಿಗೆ ಅಂತಹ ಆಯ್ಕೆಗಳಿಲ್ಲ ಎನ್ನುವುದು ನಿಜ. ಸರ್ಕಾರ ಇಲ್ಲವೇ ಆಡಳಿತಾರೂಢ ಪಕ್ಷ ಭ್ರಷ್ಟಗೊಂಡಿರುವುದು ಈಗಿನ ಸಮಸ್ಯೆ ಅಲ್ಲ. ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸ ನೋಡಿದರೆ ಇದೊಂದು ಸಾಮಾನ್ಯ ಬೆಳವಣಿಗೆ ಎಂದು ಗೊತ್ತಾಗುತ್ತದೆ.
ಅಧಿಕಾರಕ್ಕೇರಿದ ರಾಜಕೀಯ ಪಕ್ಷ ಭ್ರಷ್ಟಗೊಳ್ಳುತ್ತಾ ಹೋಗುವುದು, ವಿರೋಧಪಕ್ಷಗಳು ಸರ್ಕಾರದ ವಿರುದ್ದ ಹೋರಾಟಕ್ಕೆ ಇಳಿಯುವುದು, ಕ್ರಮೇಣ ಮತದಾರರ ಕಣ್ಣಿಗೆ ವಿರೋಧ ಪಕ್ಷಗಳ ನಾಯಕರೇ ಸಂಭಾವಿತರಂತೆ ಕಂಡು ಅವರನ್ನು ಮತ್ತೆ ಆಯ್ಕೆ ಮಾಡುವುದು.. ಇವೆಲ್ಲ ಸಾಮಾನ್ಯ.

ಆದರೆ ನೈತಿಕವಾಗಿ ದಿವಾಳಿಯಾಗಿರುವ ನಮ್ಮ ವಿರೋಧ ಪಕ್ಷಗಳು ಭ್ರಷ್ಟ ಸರ್ಕಾರವನ್ನು ಪ್ರಶ್ನಿಸಲಾಗದಷ್ಟು ಅಸಹಾಯಕವಾಗಿರುವುದು ಕೂಡಾ ಇಂದಿನ ಬಿಕ್ಕಟ್ಟಿಗೆ ಕಾರಣ.
ಈ ಹತಾಶೆ ಜನಸಮುದಾಯದಲ್ಲಿಯೂ ವ್ಯಕ್ತವಾಗುತ್ತಿದೆ. ಇದಕ್ಕೆ ಏನು ಪರಿಹಾರ? ರಾಜಕಾರಣಿಗಳನ್ನು ಸಾಮೂಹಿಕವಾಗಿ ಗಲ್ಲಿಗೇರಿಸುವುದೇ?
 ಸಮಸ್ಯೆ ಏನೆಂದರೆ ತಮ್ಮ ಹೋರಾಟ ಸಾಮಾಜಿಕವಾದುದೇ, ರಾಜಕೀಯವಾದುದೇ ಎಂಬ ಬಗ್ಗೆ ಅಣ್ಣಾ ಹಜಾರೆ ಮತ್ತು ಸಂಗಡಿಗರಲ್ಲಿಯೇ ಸ್ಪಷ್ಟತೆ ಇಲ್ಲ.

ತಮ್ಮದು ರಾಜಕೀಯಾತೀತ ಚಳವಳಿ ಎಂದು ಘೋಷಿಸಿಕೊಂಡರೂ ಅವರ ನಡೆ-ನುಡಿಗಳು ರಾಜಕೀಯ ಹೋರಾಟದ ಶೈಲಿಯಲ್ಲಿಯೇ ಇವೆ. ಆಡಳಿತಾರೂಢ ಸರ್ಕಾರವನ್ನು ಮಣಿಸಲು ಹೊರಟವರು ತಮ್ಮ ಚಳವಳಿಯನ್ನು `ರಾಜಕೀಯದಿಂದ ದೂರ ಇದ್ದು ಮಾಡುತ್ತೇವೆ~ ಎಂದು ಹೇಳಲಾಗುವುದಿಲ್ಲ.

ಒಂದು ಸರ್ಕಾರವನ್ನೇ ಉರುಳಿಸುತ್ತೇನೆಂದು ಹೊರಟಾಗ ಅದಕ್ಕೊಂದು ಪರ್ಯಾಯ ಸಿದ್ಧ ಇರಬೇಕಾಗುತ್ತದೆ. ಇಲ್ಲದಿದ್ದರೆ ಅರಾಜಕತೆಯನ್ನು ಹುಟ್ಟುಹಾಕಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ್ಯಾಯ ಕೂಡ ರಾಜಕೀಯ ಕ್ಷೇತ್ರದೊಳಗಡೆಯಿಂದಲೇ ಸೃಷ್ಟಿಯಾಗಬೇಕಾಗುತ್ತದೆ.
ಆದರೆ ನಾಗರಿಕ ಸಮಿತಿ ಸದಸ್ಯರು ಒಂದು ಭ್ರಷ್ಟ ಸರ್ಕಾರವನ್ನು ವಿರೋಧಿಸುವ ಭರದಲ್ಲಿ ರಾಜಕಾರಣ, ರಾಜಕಾರಣಿ ಮತ್ತು ಒಟ್ಟು ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆಯೇ  ವಿಶ್ವಾಸ ಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಪರಿಹಾರ ಏನು? ದೇಶದ ಆಡಳಿತವನ್ನೇ ಲೋಕಪಾಲರಿಗೆ ಒಪ್ಪಿಸುವುದೇ?

Monday, June 20, 2011

ಜನಲೋಕಪಾಲ ಸರ್ವರೋಗಕ್ಕೆ ಪರಿಹಾರವೇ?

ಭಾರತದಲ್ಲಿ ಸಂಸದೀಯ ಪ್ರಜಾಪ್ರಭುತ್ವ ವಿಫಲಗೊಂಡಿದೆ ಎಂದು ಇಲ್ಲಿಯವರೆಗೆ `ಕಾಡಿನವರು~ ಮಾತ್ರ ಹೇಳುತ್ತಿದ್ದರು, ಈಗ `ನಾಡಿನವರು~ ಕೂಡಾ ಹೇಳತೊಡಗಿದ್ದಾರೆ.
ಹದಿನಾಲ್ಕು ರಾಜ್ಯಗಳಲ್ಲಿ ಹಾದುಹೋಗಿರುವ ಮತ್ತು ದೇಶದ ಶೇಕಡಾ 40ರಷ್ಟು ಪ್ರದೇಶದಲ್ಲಿ ವ್ಯಾಪಿಸಿರುವ `ರೆಡ್ ಕಾರಿಡಾರ್~ನಲ್ಲಿ `ಕಾಡಿನವರ ಸರ್ಕಾರ~ ಇದೆ.
ಅಲ್ಲಿರುವ ದೇಶದ ಶೇಕಡಾ 35ರಷ್ಟು ಜನ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ.
ತಲೆಮಾರುಗಳಿಂದ ಅಭಿವೃದ್ಧಿ ವಂಚಿತರಾಗಿರುವ ಈ ಶೋಷಿತ ಜನಸಮುದಾಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದರೆ ಅದು ಸಹಜ. ಆಶ್ಚರ‌್ಯವೆಂದರೆ  ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡು ಚುನಾವಣೆಯಲ್ಲಿ ಮತಚಲಾಯಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಿರುವ ಮತ್ತು ಅವರಿಂದ ಆಯ್ಕೆಗೊಂಡಿರುವ `ನಾಡಿನವರು~ ಕೂಡಾ `ಕಾಡಿನವರ~ ಭಾಷೆಯಲ್ಲಿಯೇ ಮಾತನಾಡುತ್ತಿರುವುದು.
ಇದಕ್ಕೆ ಇತ್ತೀಚಿನ ಉದಾಹರಣೆ- ಸಂವಿಧಾನದ ಪ್ರಮುಖ ಅಂಗವಾಗಿರುವ ನ್ಯಾಯಾಂಗದ ಮೇಲೆ ನಂಬಿಕೆ ಕಳೆದುಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ದೇವರ ಮೇಲೆ ಆಣೆ ಮಾಡಲು ಹೊರಟಿರುವುದು.
ಅಲ್ಲಿಗೆ ಕಳೆದ 60 ವರ್ಷಗಳಿಂದ ನಾವು ಒಪ್ಪಿಕೊಂಡಿರುವ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ರೋಗಗ್ರಸ್ತವಾಗಿದೆ ಎಂದು ಬಹು ಸಂಖ್ಯಾತ ಜನ ಒಪ್ಪಿಕೊಂಡಂತಾಯಿತು. ಆ ಬಗ್ಗೆ ವಿವಾದಗಳಿಲ್ಲ. ವಿವಾದ ಇರುವುದು ಇದಕ್ಕೆ ನೀಡಬೇಕಾದ ಚಿಕಿತ್ಸೆ ಬಗ್ಗೆ.
ಕಾಡಿನಲ್ಲಿರುವ ಮಾವೋವಾದಿಗಳ ಪ್ರಕಾರ ಇದು ಚಿಕಿತ್ಸೆ ಮೀರಿದ ರೋಗ. `ಈಗಿನ ವ್ಯವಸ್ಥೆಯನ್ನು ನಾಶಮಾಡಿದರೆ ಮಾತ್ರ ಹೊಸ ವ್ಯವಸ್ಥೆ ಹುಟ್ಟಲು ಸಾಧ್ಯ. ಅದನ್ನೇ ನಾವು ಬಂದೂಕಿನ ಮೂಲಕ ಮಾಡಲು ಹೊರಟಿದ್ದೇವೆ~ ಎನ್ನುತ್ತಾರೆ ಅವರು.

ಇದನ್ನು ಕಾಂಗ್ರೆಸಿಗರು, ಮಾರ್ಕ್ಸಿಸ್ಟರು, ಸೋಷಿಯಲಿಸ್ಟರು, ಉದಾರವಾದಿಗಳು, ಸಂಪ್ರದಾಯವಾದಿಗಳು ಮಾತ್ರವಲ್ಲ, ಬಹು ಸಂಖ್ಯೆಯ ಜನಸಮುದಾಯ ಕೂಡಾ ಒಪ್ಪುವುದಿಲ್ಲ. ಹಾಗಿದ್ದರೆ ಇದಕ್ಕೇನು ಚಿಕಿತ್ಸೆ? ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಜನಪ್ರಿಯ ಔಷಧಿಯ ಹೆಸರು `ಲೋಕಪಾಲ ಮಸೂದೆ~.
ಇದು ಸರ್ವರೋಗ ನಿವಾರಕ ಎಂದು ಅದರ ತಯಾರಕರು ಹೇಳಿಕೊಳ್ಳದಿದ್ದರೂ ಹಾಗೆಂದು ಅದರ ಬೆಂಬಲಿಗರು ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಪ್ರಚಾರದಿಂದಾಗಿ ಜನತೆಯಲ್ಲಿನ ನಿರೀಕ್ಷೆ ಕೂಡಾ ಆಕಾಶದೆತ್ತರಕ್ಕೆ ಏರಿದೆ.
ಒಂದೊಮ್ಮೆ ನಾಗರಿಕ ಸಮಿತಿ ರಚಿಸಿರುವ ಜನಲೋಕಪಾಲ ಮಸೂದೆಯನ್ನು ಯಥಾವತ್ತಾಗಿ ಸಂಸತ್ ಅಂಗೀಕರಿಸಿ ಕಾನೂನಿನ ರೂಪ ನೀಡಿದರೆ ಸಾರ್ವಜನಿಕ ಜೀವನದಲ್ಲಿನ ಭ್ರಷ್ಟಾಚಾರದ ಮೂಲೋತ್ಪಾಟನೆಯಾಗುವುದೇ? ಪ್ರಜಾಪ್ರಭುತ್ವಕ್ಕೆ ತಗಲಿರುವ ರೋಗ ವಾಸಿಯಾಗುವುದೇ? ಈ ಬಗ್ಗೆ ಅನುಮಾನಿಸುವುದಕ್ಕೆ ಕಾರಣಗಳಿವೆ.
ಮೊದಲನೆಯದಾಗಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ಕೂರುತ್ತೇನೆಂದು ಹೇಳಿದ ದಿನದಿಂದ ಇಲ್ಲಿಯವರೆಗೆ ನಡೆಯುತ್ತಿರುವ ಚರ್ಚೆಯೆಲ್ಲವೂ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಸುತ್ತಲೇ ಗಿರ್ಕಿ ಹೊಡೆಯುತ್ತಿದೆ. ಬಹುಮುಖ್ಯವಾದ ಎರಡು ಕ್ಷೇತ್ರಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಯಾಕೋ ಚರ್ಚೆ ನಡೆಯುತ್ತಿಲ್ಲ.

ಈ ಎರಡರಲ್ಲಿ ಮೊದಲನೆಯದು ಕಾರ್ಪೋರೇಟ್ ಕ್ಷೇತ್ರ, ಎರಡನೆಯದು ಧಾರ್ಮಿಕ ಕ್ಷೇತ್ರ. ನಮ್ಮೆಲ್ಲ ಚರ್ಚೆ ನಡೆಯುತ್ತಿರುವುದು ಲಂಚ ಸ್ವೀಕರಿಸುತ್ತಿರುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಬಗ್ಗೆ. ಇವರಿಬ್ಬರಿಗೂ ಲಂಚ ಸ್ವೀಕರಿಸಿಯಷ್ಟೇ ಗೊತ್ತು ವಿನಾ ಲಂಚ ಕೊಟ್ಟು ಗೊತ್ತಿಲ್ಲ. ಆದರೆ  ಇವರಿಗೆ ಲಂಚ ಕೊಡುವವರು ಯಾರು ಮತ್ತು ಅವರು ಯಾಕೆ ಕೊಡುತ್ತಿದ್ದಾರೆ? ಯಾರೂ ಕೇಳುತ್ತಿಲ್ಲ.
ನೈತಿಕ ದೃಷ್ಟಿಯಿಂದ ಲಂಚ ಸ್ವೀಕರಿಸಿದ್ದಕ್ಕಿಂತ ಲಂಚ ಕೊಡುವುದು ಸ್ವಲ್ಪ ಸಣ್ಣ ಪ್ರಮಾಣದ ಅಪರಾಧವಾಗಿರಬಹುದು. ಆದರೆ ಅದರ ಪರಿಣಾಮ? ಸಚಿವರು ಮತ್ತು ಉನ್ನತಾಧಿಕಾರಿಗಳ ಮಟ್ಟದಲ್ಲಿ ಲಂಚ ನೀಡುವವನು ಹಳ್ಳಿಯ ಬಡಬೋರೇಗೌಡ ಅಲ್ಲ, ಅವನು ಖಂಡಿತವಾಗಿಯೂ ಒಬ್ಬ ಉದ್ಯಮಿಯಾಗಿರುತ್ತಾನೆ.
ಇಲ್ಲಿಯವರೆಗೆ ಬಯಲಾಗಿರುವ ಯಾವ ಹಗರಣವನ್ನು ತೆಗೆದುಕೊಂಡರೂ ಅದರಲ್ಲಿ ಉದ್ಯಮಿಗಳ ಪ್ರಮುಖ ಪಾತ್ರವನ್ನು ಕಾಣಬಹುದು. ಒಬ್ಬ ಉದ್ಯಮಿ ಹತ್ತುಕೋಟಿ ರೂಪಾಯಿ ಲಂಚ ನೀಡಿ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟುಮಾಡುವಂತಹ ಅಕ್ರಮ ವ್ಯವಹಾರ ನಡೆಸಿ ಸಾವಿರಾರು ಕೋಟಿ ರೂಪಾಯಿ ಲಾಭ ಪಡೆದಿರುತ್ತಾನೆ.
ಇದಕ್ಕೆ ಉತ್ತಮ ಉದಾಹರಣೆ 2ಜಿ ತರಂಗಾಂತರ ಹಗರಣ. ಇದರಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಅಧಿಕಾರಿಗಳು ಅತ್ಯಧಿಕವೆಂದರೆ  ಒಂದೆರಡು ಸಾವಿರಕೋಟಿ ಲಂಚ ಪಡೆದಿರಬಹುದು, ಆದರೆ ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟ ಅಂದಾಜು 1.76 ಲಕ್ಷ ಕೋಟಿ ರೂಪಾಯಿ ಅಲ್ಲವೇ? ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿರುವ, ಬ್ಯಾಂಕ್ ಸಾಲ ಮುಳುಗಿಸಿರುವ, ಲಂಚ ಕೊಟ್ಟು ಸರ್ಕಾರದ ನೀತಿಗಳನ್ನೇ ಬದಲಾಯಿಸಿರುವ ಆರೋಪ ಹೊತ್ತ ನೂರಾರು ಉದ್ಯಮಿಗಳು ನಮ್ಮ ನಡುವೆ ಇದ್ದಾರೆ.
ಬಹಳಷ್ಟು ಉದ್ಯಮಿಗಳು ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲವನ್ನು ಮಾತ್ರವಲ್ಲ, ದೇಣಿಗೆಯನ್ನೂ ನೀಡಿದ್ದಾರೆ. ಅಣ್ಣಾ ಹಜಾರೆ ಅವರ ಸತ್ಯಾಗ್ರಹಕ್ಕಾಗಿ ಸಂಗ್ರಹ ಮಾಡಿದ ಹಣದ ಮೊತ್ತ 82.88 ಲಕ್ಷ ರೂಪಾಯಿ, ಅದರಲ್ಲಿ ಉದ್ಯಮಿಗಳಿಂದ ಸಂಗ್ರಹವಾದ ದೇಣಿಗೆಯ ಒಟ್ಟು ಮೊತ್ತ 46.50 ಲಕ್ಷ ರೂಪಾಯಿ.ಅಂದರೆ ಸತ್ಯಾಗ್ರಹಕ್ಕೆ ಖರ್ಚಾದ ಹಣದಲ್ಲಿ ಅರ್ಧಕ್ಕಿಂತಲೂ ಹೆಚ್ಚಿನ ಹಣ ನೀಡಿದವರು ಉದ್ಯಮಿಗಳು.

ಭ್ರಷ್ಟಾಚಾರದ ವಿರುದ್ಧದ ಹೋರಾಟದ ಗಮನವನ್ನು ಸಂಪೂರ್ಣವಾಗಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ಕಡೆ ಕೇಂದ್ರೀಕರಿಸಿ ತಮ್ಮ ಕಡೆ ಯಾರೂ ಕಣ್ಣು ಹಾಯಿಸದಂತೆ ಮಾಡುವುದು ಇದರ ಹಿಂದಿನ ಹುನ್ನಾರವೇ?
ಚರ್ಚೆಯಾಗದೆ ಉಳಿದಿರುವ ಎರಡನೇ ಕ್ಷೇತ್ರ ಧಾರ್ಮಿಕ ಕೇಂದ್ರಗಳದ್ದು. ಕಳೆದೆರಡು ದಿನಗಳಲ್ಲಿ ದಿವಂಗತ ಸತ್ಯಸಾಯಿ ಬಾಬಾ ಅವರ ಖಾಸಗಿ ಕೋಣೆಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಹಾಗೂ ನಗದು ಹಣ ಪತ್ತೆಯಾಗಿರುವುದೇ ದೊಡ್ಡ ಸುದ್ದಿ. ಇವೆಲ್ಲವೂ ಅಕ್ರಮವಾಗಿ ಕೂಡಿಟ್ಟದ್ದಲ್ಲವೇ?
ಸಂಬಳಕ್ಕೆ ದುಡಿಯುವ ಒಬ್ಬ ಸಾಮಾನ್ಯ ನೌಕರ ತನ್ನ ಗಳಿಕೆಯ ಮೂರನೇ ಒಂದರಷ್ಟು ಭಾಗವನ್ನು ವರಮಾನ ತೆರಿಗೆಯಾಗಿ ಪಾವತಿಸದಿದ್ದರೆ ನೋಟಿಸ್ ನೀಡುವ ವರಮಾನ ತೆರಿಗೆ ಇಲಾಖೆಯ ಕಣ್ಣಿಗೆ ಸಾಯಿಬಾಬಾ ಅವರಲ್ಲಿದ್ದ ಅಕ್ರಮ ಗಳಿಕೆ ಕಣ್ಣಿಗೆ ಬಿದ್ದಿರಲಿಲ್ಲವೇ?
ದೇಶದ ಪ್ರಧಾನಿಯಿಂದ ಹಿಡಿದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರೆಗೆ ಎಲ್ಲರನ್ನೂ ಭಕ್ತರಾಗಿ ಹೊಂದಿರುವ ಸಾಯಿಬಾಬಾ ಅವರನ್ನು ಮುಟ್ಟುವ ಧೈರ‌್ಯವಾದರೂ ಅವರಿಗೆಲ್ಲಿಂದ ಬರಬೇಕಿತ್ತು?
ಇದು ಸಾಯಿಬಾಬಾ ಒಬ್ಬರ ಕತೆಯಲ್ಲ, ನಮ್ಮ ಅನೇಕ `ದೇವ ಮಾನವರ~ ಕಪಾಟುಗಳಲ್ಲಿಯೂ `ಅಸ್ಥಿಪಂಜರ~ಗಳಿರುವ ಗುಮಾನಿ ಇದೆ. ಸರಿಯಾಗಿ ತನಿಖೆ ನಡೆಸಿದರೆ ನಮ್ಮ ಬಹುತೇಕ ಧಾರ್ಮಿಕ ಕೇಂದ್ರಗಳಲ್ಲಿಯೂ ಈ ರೀತಿಯ ಅಕ್ರಮ ಸಂಪತ್ತು ಸಂಗ್ರಹ ಬಯಲಾಗಬಹುದು.
ರಾಜಕಾರಣಿಗಳು ಕೂಡಾ ತಮ್ಮ ಅಕ್ರಮ ಗಳಿಕೆಯನ್ನು ಬಚ್ಚಿಡಲು ಮಠ-ಮಂದಿರಗಳೇ ಸುರಕ್ಷಿತ ಸ್ಥಳ ಎಂದು ಕಂಡುಕೊಂಡಿದ್ದಾರೆ. ಬಹಳಷ್ಟು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಧಿ ದಕ್ಷಿಣದ ಒಂದು ಪ್ರಸಿದ್ಧ ಮಠದಲ್ಲಿತ್ತಂತೆ.

ರಾಜ್ಯದ ಇನ್ನೊಬ್ಬ ಹಿರಿಯ ರಾಜಕಾರಣಿ ಮತ್ತು ಅವರ ಜಾತಿಯ ಮಠದ ಸ್ವಾಮೀಜಿಗಳ ನಡುವಿನ ಜಗಳಕ್ಕೂ ಅಕ್ರಮವಾಗಿ ಕೂಡಿಟ್ಟಿರುವ ಹಣವೇ ಕಾರಣ ಎಂದು ಬಲ್ಲವರು ಹೇಳುತ್ತಾರೆ.

ಮಠ-ಮಂದಿರಗಳಿಗೆ ಬಹಳಷ್ಟು ಸಮೀಪ ಇರುವ ರಾಜ್ಯ ಈಗಿನ ಆಡಳಿತಾರೂಢ ಪಕ್ಷದ ನಾಯಕರ ಮೇಲೂ ಇಂತಹದ್ದೇ ಆರೋಪಗಳಿವೆ. ಇದು ಕೇವಲ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸೀಮಿತವಾಗಿಲ್ಲ.
ಮಸೀದಿ ಮತ್ತು ಚರ್ಚುಗಳಿಗೆ ವಿದೇಶದಿಂದ ಹೇರಳವಾಗಿ ಬರುವ ಹಣಕ್ಕೆ ಸಂಬಂಧಿಸಿದಂತೆಯೂ ಅಕ್ರಮ ಸಂಗ್ರಹದ ಆರೋಪ ಇದೆ. ಲೋಕಪಾಲ ಮಸೂದೆ ಬಗ್ಗೆ ಚರ್ಚೆ ನಡೆಸುವಾಗ ಸರ್ಕಾರ ಮತ್ತು ನಾಗರಿಕ ಸಮಿತಿ ಕೂಡಿಯೇ ಧಾರ್ಮಿಕ ಕ್ಷೇತ್ರಕ್ಕೆ ವಿನಾಯಿತಿ ನೀಡಿದಂತಿದೆ.
ಜನಲೋಕಪಾಲ ಮಸೂದೆಯ ಬಗ್ಗೆ ಇರುವ ಇನ್ನೊಂದು ಸಾಮಾನ್ಯ ಭಿನ್ನಾಭಿಪ್ರಾಯ -ಅದು ಕೇಳುತ್ತಿರುವ `ಸರ್ವಾಧಿಕಾರ~ದ ಬಗ್ಗೆ.
ಪ್ರಧಾನ ಮಂತ್ರಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ತನ್ನ ವ್ಯಾಪ್ತಿಗೆ ಒಳಪಡಿಸಬೇಕು. ಇದರ ಜತೆಯಲ್ಲಿ ಸಂಸತ್‌ನೊಳಗಿನ ಸಂಸದರ ನಡವಳಿಕೆಯನ್ನು ಕೂಡಾ ತನಿಖೆ ಮಾಡುವಂತಹ ಅಧಿಕಾರ ಇರಬೇಕು, ಕೇಂದ್ರ ತನಿಖಾದಳ (ಸಿಬಿಐ) ಮತ್ತು ಕೇಂದ್ರ ಜಾಗೃತ ಆಯೋಗಗಳನ್ನು (ಸಿವಿಸಿ) ಕೂಡಾ ತನ್ನ ಅಧೀನಕ್ಕೆ ಒಪ್ಪಿಸಬೇಕು...ಹೀಗೆ ಎಲ್ಲ ಅಧಿಕಾರವನ್ನು ಲೋಕಪಾಲರಿಗೆ ನೀಡಬೇಕು ಎಂದು ನಾಗರಿಕ ಸಮಿತಿ ಕೇಳುತ್ತಿದೆ.
ಪ್ರಜಾಪ್ರಭುತ್ವದ ಮೂಲ ಸಿದ್ಧಾಂತ ಅಧಿಕಾರ ವಿಕೇಂದ್ರೀಕರಣವೇ ಹೊರತು ಕೇಂದ್ರೀಕರಣ ಅಲ್ಲ. ಯಾವುದೇ ವ್ಯಕ್ತಿ ಇಲ್ಲವೇ ಸಂಸ್ಥೆಯಲ್ಲಿ ಅಧಿಕಾರ ಕೇಂದ್ರೀಕರಣವಾಗಬಾರದು ಎಂದು ಹೇಳುತ್ತದೆ ಪ್ರಜಾಪ್ರಭುತ್ವ. ಇದು ಸಂವಿಧಾನದ ಆಶಯ ಕೂಡಾ ಹೌದು.
ಎಲ್ಲವನ್ನೂ ಲೋಕಪಾಲರ ಸುಪರ್ದಿಗೆ ಒಪ್ಪಿಸುವುದರ ಬದಲಿಗೆ ಇದ್ದ ಜಾಗದಲ್ಲಿಯೇ ಅವುಗಳು ಇನ್ನಷ್ಟು ಸ್ವತಂತ್ರವಾಗಿ ಮತ್ತು ಕ್ಷಮತೆಯಿಂದ ಕಾರ‌್ಯನಿರ್ವಹಿಸುವಂತೆ ಮಾಡಬೇಕಾಗಿದೆ. ಇದಕ್ಕಾಗಿ ಬೇರೇನೂ ಮಾಡಬೇಕಾಗಿಲ್ಲ.
ಸರ್ಕಾರಿಯಾ ಆಯೋಗ, ರಾಷ್ಟ್ರೀಯ ಸಂವಿಧಾನ ಕಾರ‌್ಯನಿರ್ವಹಣೆಯ ಪುನರ್‌ಪರಿಶೀಲನಾ ಆಯೋಗ ಮತ್ತು ಚುನಾವಣಾ ಆಯೋಗದ ಶಿಫಾರಸುಗಳು ಮತ್ತು ಕಾಲಕಾಲಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳನ್ನು ಜಾರಿಗೆ ತಂದರೆ ಸಾಕು.
ಇವುಗಳಲ್ಲಿ ಅತೀ ತುರ್ತಾಗಿ ನಡೆಯಬೇಕಾಗಿರುವುದು ಚುನಾವಣಾ ಸುಧಾರಣೆ. ಪ್ರಾಮಾಣಿಕರು, ಸಜ್ಜನರು, ಜನಪರ ಕಾಳಜಿ ಉಳ್ಳವರು ಚುನಾವಣಾ ರಾಜಕೀಯಕ್ಕೆ ಇಳಿಯಲಾಗದ ಸ್ಥಿತಿಯೇ ಭಾರತದ ಸಂಸದೀಯ ಪ್ರಜಾಪ್ರಭುತ್ವಕ್ಕೆ ತಗಲಿರುವ ರೋಗಕ್ಕೆ ಮೂಲ ಕಾರಣ.
ಕ್ರಿಮಿನಲ್ ಹಿನ್ನೆಲೆಯ 150 ಸದಸ್ಯರು ಮತ್ತು 300 ಕೋಟ್ಯಧಿಪತಿ ಸದಸ್ಯರನ್ನೊಳಗೊಂಡ ಈಗಿನ ಲೋಕಸಭೆ ತಮ್ಮ ಕೊರಳಿಗೆ ಉರುಳಾಗಲಿರುವ ಲೋಕಪಾಲ ಮಸೂದೆಗೆ ಕಣ್ಣುಮುಚ್ಚಿ ಅಂಗೀಕಾರ ನೀಡಬಹುದೆಂದು ತಿಳಿದುಕೊಂಡವರು ಮೂರ್ಖರು ಅಷ್ಟೆ.

ಇದು ಗೊತ್ತಿದ್ದೂ  ಉಪವಾಸ ಸತ್ಯಾಗ್ರಹದ ಮೂಲಕ ಏಕಾಏಕಿ ಸರ್ಕಾರವನ್ನು ಮಣಿಸುತ್ತೇವೆಂದು ಹೊರಡುವುದು ವ್ಯರ್ಥ ದೇಹ ದಂಡನೆಯಾಗಬಹುದೇ ಹೊರತು ಯಶಸ್ಸಿನ ಫಲ ಸಿಗಲಾರದು.
ಮೊದಲು ನಡೆಯಬೇಕಾಗಿರುವುದು ಭ್ರಷ್ಟಾಚಾರವನ್ನು ತಡೆಯುವ ಪ್ರಯತ್ನ, ಭ್ರಷ್ಟರನ್ನು ಶಿಕ್ಷಿಸುವುದು ನಂತರದ ಕೆಲಸ. ಈ ಹಿನ್ನೆಲೆಯಲ್ಲಿ ಭ್ರಷ್ಟರನ್ನು ಶಿಕ್ಷಿಸಲು ಲೋಕಪಾಲರನ್ನು ನೇಮಿಸುವ ಮೊದಲು ಭ್ರಷ್ಟರ ಹುಟ್ಟಿಗೆ ಕಾರಣವಾಗಿರುವ ವ್ಯವಸ್ಥೆಯ ಸುಧಾರಣೆಯ ಬಗ್ಗೆ ನಾಗರಿಕ ಸಮಿತಿ ಯೋಚಿಸಬೇಕಾಗಿತ್ತು.
ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರುವ ಮೂಲಕ ಒಂದು ಸ್ವಚ್ಛ, ಪ್ರಾಮಾಣಿಕ ಮತ್ತು ಸೇವಾನಿಷ್ಠ ಸಂಸದರನ್ನೊಳಗೊಂಡ ಸಂಸತ್ ರಚನೆಗೊಳ್ಳುವಂತೆ ಮಾಡಬೇಕಾಗಿತ್ತು.
ಇದು ಅಸಾಧ್ಯವಾದ ಕೆಲಸ ಅಲ್ಲ. ಈಗಿನ ಪ್ರಜಾಪ್ರತಿನಿಧಿ ಕಾಯಿದೆ ಪ್ರಕಾರ ನ್ಯಾಯಾಲಯಗಳಲ್ಲಿ ಮೇಲ್ಮನವಿ ಇತ್ಯರ್ಥಕ್ಕೆ ಬಾಕಿ ಇರುವ ವರೆಗೆ ಎಂತಹ ಘನಘೋರ ಅಪರಾಧಿ ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.
ಚುನಾವಣಾ ಕಾನೂನಿನಲ್ಲಿರುವ ಈ ಲೋಪದ ನಿವಾರಣೆಗಾಗಿಯೇ ಚುನಾವಣಾ ಆಯೋಗ ಪ್ರಮುಖ ಸುಧಾರಣಾ ಕ್ರಮವನ್ನು ಶಿಫಾರಸು ಮಾಡಿದೆ. `ಐದು ವರ್ಷಗಳಿಗಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಅರ್ಹವಾಗಿರುವ ಅಪರಾಧಗಳಲ್ಲಿ ಆರೋಪಿಯಾಗಿರುವವರು, ಒಂದೊಮ್ಮೆ ಆ ಪ್ರಕರಣದ ತೀರ್ಪಿನ ವಿರುದ್ದದ ಮೇಲ್ಮನವಿ ಇತ್ಯರ್ಥಕ್ಕೆ ಬಾಕಿ ಇದ್ದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ~ ಎನ್ನುತ್ತದೆ ಈ ಸುಧಾರಣಾ ಕ್ರಮ.
ಇದೊಂದು ಜಾರಿಯಾದರೆ ಈಗಿನ ಲೋಕಸಭೆಯಲ್ಲಿರುವ ಸುಮಾರು 150 ಕ್ರಿಮಿನಲ್ ಹಿನ್ನೆಲೆಯ ಸದಸ್ಯರು ಜಾಗ ಖಾಲಿ ಮಾಡಬೇಕಾಗುತ್ತದೆ. ಮುಂದಿನ ಚುನಾವಣೆಗಳಲ್ಲಿ ಒಂದಷ್ಟು ಸಜ್ಜನರು ಸಂಸತ್ ಪ್ರವೇಶಿಸುವ ಪ್ರಯತ್ನ ಮಾಡಬಹುದು. ಆಗ ಮಾತ್ರ ಜನಪರವಾದ ಕಾನೂನುಗಳ ರಚನೆ ಮತ್ತು ಅನುಷ್ಠಾನವನ್ನು ನಿರೀಕ್ಷಿಸಲು ಸಾಧ್ಯ.

Monday, June 13, 2011

ಸಂವಿಧಾನೇತರ ಶಕ್ತಿಗಳ ನಿಯಂತ್ರಣದಲ್ಲಿ ಪಕ್ಷಗಳು

ಸಾರ್ವಜನಿಕ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವ ಸಂವಿಧಾನೇತರ ಶಕ್ತಿಗಳಿಂದಾಗಿ ದೇಶದ ಸಂಸದೀಯ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ ಎಂಬ ಹುಯಿಲೆದ್ದಿದೆ. ಆಳುವ ಪಕ್ಷ ವ್ಯಕ್ತಪಡಿಸುತ್ತಿರುವ ಈ ಆತಂಕದಲ್ಲಿ ಸ್ವಹಿತಾಸಕ್ತಿಗಳಿದ್ದರೂ ಸತ್ಯಾಂಶ ಇಲ್ಲವೆಂದಲ್ಲ. ಆದರೆ, ಇದು ಪ್ರಾರಂಭವಾಗಿದ್ದು ಅಣ್ಣಾ ಹಜಾರೆ ಇಲ್ಲವೇ ಬಾಬಾ ರಾಮ್‌ದೇವ್ ಉಪವಾಸ ಸತ್ಯಾಗ್ರಹಗಳಿಂದಲ್ಲ.
ಈ ಎರಡು ಸತ್ಯಾಗ್ರಹಗಳ ಕುರಿತು ಸಂಪೂರ್ಣವಾಗಿ `ಸಂವಿಧಾನೇತರ ಶಕ್ತಿಗಳ ಕುಟಿಲ ಯತ್ನ~ ಎಂದು ಬಣ್ಣಿಸುವುದು ಕೂಡಾ ಸರಿಯಲ್ಲ.
ಶಾಸನರಚನೆಗೆ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಪ್ರಜಾಪ್ರಭುತ್ವದ ವ್ಯಾಪ್ತಿಯಲ್ಲಿಯೇ ಬರುತ್ತದೆ. ದೇಶದಲ್ಲಿ ಹಿಂದೆ ನಡೆದಿರುವ ಮತ್ತು ಈಗಲೂ ನಡೆಯುತ್ತಿರುವ ಅನೇಕ ಚಳವಳಿಗಳು ಇದೇ ಮಾದರಿಯವು.
ಆದರೆ ಶಾಸನರಚನೆಯ ಪ್ರಕ್ರಿಯೆಯಲ್ಲಿಯೂ ತಮ್ಮನ್ನು ಸೇರಿಸಿಕೊಳ್ಳಬೇಕು ಎಂದು ಚಳವಳಿಗಾರರು ಹೇರುವ ಒತ್ತಡ ಪ್ರಜಾಸತ್ತಾತ್ಮಕವಾದುದೇ ಎನ್ನುವುದಷ್ಟೇ ಈಗಿನ ಪ್ರಶ್ನೆ.
`ಅಣ್ಣಾ ಹಜಾರೆ, ನ್ಯಾಯಮೂರ್ತಿ ಎನ್ . ಸಂತೋಷ್ ಹೆಗ್ಡೆ, ಅರವಿಂದ್ ಕೇಜ್ರಿವಾಲ್ ಮೊದಲಾದವರು ಶಾಸನರಚನೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದರಿಂದ ಇದರಲ್ಲಿ ತಪ್ಪಿಲ್ಲ~ ಎಂದು ಈ ಕ್ಷಣದಲ್ಲಿ ಅನಿಸಬಹುದು.
ಆದರೆ ಇದನ್ನೇ ಪೂರ್ವ ನಿದರ್ಶನವಾಗಿ ಇಟ್ಟುಕೊಂಡು ಉಳಿದವರು ಇದೇ ಮಾರ್ಗವನ್ನು ಅನುಸರಿಸಿದರೇ? ಬಹಳ ದೂರವೇನೂ ಹೋಗಬೇಕಾಗಿಲ್ಲ, ನಾಳೆ ಬಾಬಾ ರಾಮ್‌ದೇವ್ ಅವರು ಕಪ್ಪುಹಣ ವಾಪಸು ಪಡೆಯುವ ಕಾನೂನಿನ ರಚನೆಯಲ್ಲಿಯೂ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಉಪವಾಸ ಸತ್ಯಾಗ್ರಹದ ಮೂಲಕ ಹಠ ಹಿಡಿದರೆ? ಅಣ್ಣಾಹಜಾರೆ ಅವರ ಪಾಲ್ಗೊಳ್ಳುವಿಕೆಯನ್ನು ಒಪ್ಪುವವರು
ಬಾಬಾ ರಾಮ್‌ದೇವ್ ಅವರನ್ನೂ ಒಪ್ಪಿಕೊಳ್ಳುವರೇ? ಈ ಪ್ರಶ್ನೆಗಳ ಹಿನ್ನೆಲೆಯಲ್ಲಿ ಸಂವಿಧಾನೇತರ ಶಕ್ತಿಗಳ ಪಾತ್ರವನ್ನು ನೋಡಬೇಕಾಗಿದೆ. ನಮಗೆಅರಿವಿಲ್ಲದಂತೆಯೇ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಾ ಬರುತ್ತಿರುವ ಮತ್ತು ರಾಜಕೀಯ ಪಕ್ಷಗಳು ಶರಣಾಗಿರುವ ಸಂವಿಧಾನೇತರ ಶಕ್ತಿಗಳ ಬಗ್ಗೆಯೂ ಚರ್ಚೆ ನಡೆಯಬೇಕಾಗಿದೆ.
ಸಂವಿಧಾನೇತರ ಶಕ್ತಿಗಳ ಬಗ್ಗೆ ಮಾತನಾಡುವಾಗ ಎಲ್ಲರೂ ತೆರೆಯ ಮುಂದಿನ ಪಾತ್ರಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ನಿಜಕ್ಕೂ ಹಾನಿ ಉಂಟು ಮಾಡುತ್ತಿರುವುದು ತೆರೆಯ ಹಿಂದಿನ ಸಂವಿಧಾನೇತರ ಶಕ್ತಿಗಳು.
ದೇಶದ ಪ್ರಜಾಪ್ರಭುತ್ವದಲ್ಲಿ ಇವುಗಳ ಪ್ರವೇಶವಾಗಿದ್ದು ಎನ್‌ಡಿಎ ಕಾಲದಲ್ಲಿ. ಅದನ್ನೇ ಇನ್ನೊಂದು ರೀತಿಯಲ್ಲಿ ಈಗ ಮುಂದುವರಿಸಿಕೊಂಡು ಹೋಗುತ್ತಿರುವುದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ.
ಸಂವಿಧಾನೇತರ ಶಕ್ತಿಯ ಕಾಣದ ಕೈಗಳ ಪ್ರಭಾವ ಮೊದಲ ಬಾರಿ ದೇಶದ ಅನುಭವಕ್ಕೆ ಬಂದದ್ದು ಅಟಲಬಿಹಾರಿ ವಾಜಪೇಯಿ ಮೊದಲ ಬಾರಿ ಸಂಪುಟ ರಚನೆಗೆ ಸಿದ್ಧತೆ ನಡೆಸುತ್ತಿದ್ದಾಗ. ಜಸ್ವಂತ್‌ಸಿಂಗ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡಬೇಕೆಂದು ಹೊರಟಾಗ `ಕಾಣದ ಕೈ~ ಅವರ ಕಾಲು ಹಿಡಿದು ಎಳೆದಿತ್ತು.

ಈ `ಕಾಣದ ಕೈ~ಗಳು ಯಾರದ್ದೆಂದು ಈ ವರೆಗೆ ಯಾರೂ ಒಪ್ಪಿಕೊಳ್ಳದೆ ಇದ್ದರೂ ಅದು ರಾಷ್ಟ್ರೀಯ ಸ್ವಯಂಸೇವಕ ಸಂಘದ್ದೆಂದು ಎಲ್ಲರಿಗೂ ಗೊತ್ತಿದೆ. ಆ ದಿನದಿಂದ ಪ್ರಾರಂಭಗೊಂಡ ಆ `ಕಾಣದ ಕೈ~ಗಳ ಪ್ರಭಾವ ಎನ್‌ಡಿಎ ಸರ್ಕಾರದ ಆರು ವರ್ಷಗಳ ಅವಧಿಯುದ್ದಕ್ಕೂ ಕಾಣಿಸಿಕೊಂಡಿತು.

ಪ್ರತಿ ಬಾರಿ ಸಚಿವ ಸಂಪುಟ ರಚನೆಗೆ ಮೊದಲು ಬಿಜೆಪಿಯ ಹಿರಿಯ ನಾಯಕರು ನಾಗಪುರದಲ್ಲಿರುವ ಆರ್‌ಎಸ್‌ಎಸ್ ಹಿರಿಯರೊಂದಿಗೆ ಸಮಾಲೋಚನೆ ನಡೆಸಬೇಕಾಗಿತ್ತು, ಇಲ್ಲವೇ, ದೆಹಲಿಯ ಜಂಡೇಲಾದಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಬೇಕಾಗಿತ್ತು.
ಬಿಜೆಪಿ ಪಾಲಿಗೆ ಋಣ ಪರಿಹಾರ ಅನಿವಾರ‌್ಯವಾಗಿತ್ತು. ಅದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದದ್ದು ಸ್ವಂತ ಬಲದಿಂದ ಅಲ್ಲ, ಸಂಘ ಪರಿವಾರದ ಬೆಂಬಲದಿಂದ ಎಂಬುದು ವಿರೋಧಪಕ್ಷಗಳ ಆರೋಪವಷ್ಟೇ ಅಲ್ಲ, ಬಿಜೆಪಿ ಕೂಡಾ ಆಂತರ್ಯದಲ್ಲಿ ಹಾಗೆಯೇ ತಿಳಿದುಕೊಂಡಿತ್ತು.
ಯಾಕೆಂದರೆ ಬಿಜೆಪಿಯನ್ನು ದೆಹಲಿಯ ಸಿಂಹಾಸನದಲ್ಲಿ ಕರೆದೊಯ್ದು ಕೂರಿಸಿದ್ದು ರಾಮಜನ್ಮಭೂಮಿ ಚಳವಳಿ. ಅದು ಮೂಲತಃ ಬಿಜೆಪಿಯ ಅಜೆಂಡಾ ಆಗಿರಲಿಲ್ಲ. 80ರ ದಶಕದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾರಂಭಿಸಿದ್ದ ರಾಮಜನ್ಮಭೂಮಿ ಚಳವಳಿಗೆ ಬಿಜೆಪಿ ಅಧಿಕೃತವಾಗಿ ಪ್ರವೇಶಿಸಿದ್ದು 1989ರಲ್ಲಿ,
ಪಾಲಂಪುರದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ‌್ಯಕಾರಿ ಮಂಡಳಿ ಸಭೆಯಲ್ಲಿ ಕೈಗೊಂಡ ಗೊತ್ತುವಳಿ ಮೂಲಕ. ರಾಮಮಂದಿರ ನಿರ್ಮಾಣ, ಸಮಾನ ನಾಗರಿಕ ಸಂಹಿತೆ,  ಸಂವಿಧಾನದ 370ನೇ ಪರಿಚ್ಛೇದದ ರದ್ದತಿ..ಇವೆಲ್ಲವೂ ಮೂಲತಃ ಸಂಘ ಪರಿವಾರದ ಬೇಡಿಕೆಗಳೇ ಹೊರತು ಬಿಜೆಪಿಯವಲ್ಲ.
ಈ ಬೇಡಿಕೆಗಳನ್ನೆತ್ತಿಕೊಂಡು ರಾಜಕೀಯ ಹೋರಾಟ ನಡೆಸಿದ ಕಾರಣದಿಂದಾಗಿಯೇ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಸಂಘ ಪರಿವಾರ ಬಲವಾಗಿ ನಂಬಿದೆ. ಆ ನಂಬಿಕೆಯ ಬಲದಿಂದಲೇ ಹೆಜ್ಜೆ ಹೆಜ್ಜೆಗೂ ಎನ್‌ಡಿಎ ಸರ್ಕಾರವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಸಂಘ ಪರಿವಾರ ಪ್ರಯತ್ನ ನಡೆಸಿದ್ದು.
ಆರು ವರ್ಷಗಳ ವಾಜಪೇಯಿ ಅಧಿಕಾರವಧಿ ಪಕ್ಷ ಮತ್ತು ಸಂಘದ ನಡುವಿನ ನಿತ್ಯ ಸಂಘರ್ಷದ ಕಾಲವೂ ಆಗಿತ್ತು. ಆದರೆ ವಾಜಪೇಯಿ ಅವರ ನಾಯಕತ್ವಕ್ಕೆ ಇದ್ದ ಪ್ರಭಾವಳಿಯಿಂದಾಗಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಲು ಸಂಘಕ್ಕೆ ಸಾಧ್ಯವಾಗಿರಲಿಲ್ಲ.
ಈ ಹತಾಶೆಯಿಂದಲೇ ವಾಜಪೇಯಿ ಮತ್ತು ಅಡ್ವಾಣಿಯವರು ನಿವೃತ್ತಿಯಾಗಬೇಕೆಂದು ಬಹಿರಂಗ ಹೇಳಿಕೆ ನೀಡುವ ಮೂಲಕ ಆರ್‌ಎಸ್‌ಎಸ್ ಸರಸಂಘ ಚಾಲಕರು ಅವಮಾನಿಸಿದ್ದು. 2004ರಲ್ಲಿ ಬಿಜೆಪಿ ಸ್ವಂತಬಲದಿಂದ  `ಅಭಿವೃದ್ಧಿ~ಯ ಅಜೆಂಡಾದ ಮೂಲಕ ಲೋಕಸಭಾ ಚುನಾವಣೆಯನ್ನು ಎದುರಿಸಲು ಪ್ರಯತ್ನಿಸಿದ್ದು ನಿಜ. 
ಪ್ರಮೋದ್ ಮಹಾಜನ್ ಅವರು ಈ ಕಾರ‌್ಯತಂತ್ರವನ್ನು ರೂಪಿಸಿದ್ದರು. ಗುಜರಾತ್ ಯಶಸ್ಸಿನ ಆಕರ್ಷಣೆಗೆ ಬಲಿಯಾಗದೆ ವಾಜಪೇಯಿ ಅವರ ಸಾಧನೆಯನ್ನೇ ಮುಂದಿಟ್ಟುಕೊಂಡು `ಪ್ರಕಾಶಿಸುತ್ತಿರುವ ಭಾರತ~ದ ಮೂಲಕ ಬಿಜೆಪಿ ಚುನಾವಣೆ ಎದುರಿಸಿತ್ತು.
ಆಗ ಅನುಭವಿಸಿದ ಸೋಲು ಪಕ್ಷದೊಳಗಿರುವ ಸಂಘಪ್ರೇಮಿಗಳ ಕೈಗಳನ್ನು ಮತ್ತೆ ಬಲಪಡಿಸಿತ್ತು. ಅದರ ನಂತರ ಗೊಂದಲದಲ್ಲಿದ್ದ ಬಿಜೆಪಿ, ಈಗ ಮತ್ತೆ ತಮ್ಮ ಹಳೆಯ ದಿನಗಳಿಗೆ ಮರಳುವ ಪ್ರಯತ್ನ ಮಾಡುತ್ತಿದೆ.
ಈ ಬಾರಿ ಇದಕ್ಕೆ ಪ್ರೇರಣೆಯನ್ನು ಬಿಜೆಪಿ ಕರ್ನಾಟಕದಿಂದಲೇ ಪಡೆದಿರಬಹುದು. ಭ್ರಷ್ಟಾಚಾರದ ಹಗರಣಗಳ ಆರೋಪಕ್ಕೆ ಸಿಕ್ಕಿ ತತ್ತರಿಸಿಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆತ್ಮರಕ್ಷಣೆಗಾಗಿ ಬಳಸುತ್ತಿರುವುದು ಜಾತಿಮಠಗಳೆಂಬ ಸಂವಿಧಾನೇತರ ಶಕ್ತಿಗಳ ಬೆಂಬಲದ ಅಸ್ತ್ರವನ್ನೇ ಅಲ್ಲವೇ? ಸರ್ಕಾರ ಬೇಕಾಬಿಟ್ಟಿಯಾಗಿ ಹಂಚಿರುವ ಹಣವನ್ನು ಪಡೆದ ಮಠಗಳು ಋಣ ತೀರಿಸಲೆಂಬಂತೆ ಮುಖ್ಯಮಂತ್ರಿಗಳ ರಕ್ಷಣೆಗೆ ನಿಂತಿವೆ.
`ಅವರನ್ನು ಮುಟ್ಟಿದರೆ ಜೋಕೆ~ ಎಂದು ಬೆದರಿಕೆ ಹಾಕುವ ಮಟ್ಟಕ್ಕೆ ಸ್ವಾಮಿಗಳು ಹೋಗಿದ್ದಾರೆ. ಸಚಿವ ಸಂಪುಟಕ್ಕೆ ಸೇರ್ಪಡೆಯಿಂದ ಹಿಡಿದು ಅಧಿಕಾರಿಗಳ ವರ್ಗಾವಣೆವರೆಗೆ ಸರ್ಕಾರ ಕೈಗೊಳ್ಳಬೇಕಾಗಿರುವ ನಿರ್ಧಾರಗಳು ಜಾತಿ ಮಠಗಳ ಅಂತರಂಗದ ಚಾವಡಿಗಳಲ್ಲಿ ನಡೆಯುತ್ತಿರುವುದನ್ನು ಸರ್ಕಾರದ ಮೇಲಿನ ಸಂವಿಧಾನೇತರ ಶಕ್ತಿಗಳ ನಿಯಂತ್ರಣವೆನ್ನದೆ ಬೇರೆ ಏನೆಂದು ಕರೆಯಲು ಸಾಧ್ಯ?
ಯುಪಿಎ ಸರ್ಕಾರದೊಳಗಿನ ಈಗಿನ ಸ್ಥಿತಿ ವಾಜಪೇಯಿ ಕಾಲದ ಬಿಜೆಪಿಗಿಂತ ಭಿನ್ನವಾಗಿ ಇಲ್ಲ. ವಂಶಪರಂಪರೆಯ ರಾಜಕೀಯ ಕಾಂಗ್ರೆಸ್ ಪಕ್ಷದ ಮೇಲಿರುವ ಹಳೆಯ ಆರೋಪ.

ಆದರೆ ಆ ಪಕ್ಷದ ನಾಯಕತ್ವ ವಹಿಸುತ್ತಾ ಬಂದ ನೆಹರೂ ಕುಟುಂಬದ ಸದಸ್ಯರು ಚುನಾವಣೆಗಳನ್ನು ಎದುರಿಸಿ ಸೋಲು-ಗೆಲುವುಗಳನ್ನು ಅನುಭವಿಸಿದವರೇ ಆಗಿರುವ ಕಾರಣ ಅವರ ರಾಜಕೀಯ ಜೀವನ ಪ್ರಜಾಪ್ರಭುತ್ವದ ಚೌಕಟ್ಟಿನೊಳಗಡೆಯೇ ಇತ್ತು. ಆದ್ದರಿಂದ ಕಾಂಗ್ರೆಸ್ ಮೇಲಿನ ನೆಹರೂ ಕುಟುಂಬದ ನಿಯಂತ್ರಣವನ್ನು ಸಂವಿಧಾನೇತರ ಶಕ್ತಿಯ ನಿಯಂತ್ರಣ ಎಂದು ವ್ಯಾಖ್ಯಾನ ಮಾಡಲಾಗುವುದಿಲ್ಲ.
ಆದರೆ 2004ರ ಲೋಕಸಭಾ ಚುನಾವಣೆಯ ನಂತರ ಈ ಚಿತ್ರ ಬದಲಾಗಿ ಹೋಗಿದೆ. ಸೋನಿಯಾಗಾಂಧಿ ನೇತೃತ್ವದಲ್ಲಿಯೇ ಪಕ್ಷ ಚುನಾವಣೆ ಎದುರಿಸಿದರೂ ಪ್ರಧಾನಿಯಾಗಿದ್ದು ಮಾತ್ರ ಮನಮೋಹನ್‌ಸಿಂಗ್. ಭಾರತದ ರಾಜಕೀಯ ಸಂದರ್ಭದಲ್ಲಿ ಇದೊಂದು ಹೊಸ ಪ್ರಯೋಗ.
ರಾಜಕೀಯವಾದ ಬಿಕ್ಕಟ್ಟುಗಳಿಗೆ ಸೋನಿಯಾಗಾಂಧಿಯವರೇ ತಲೆಕೊಡುತ್ತಿರುವ ಕಾರಣ ಪ್ರಧಾನಿಯಾದವರು ಆಡಳಿತೇತರ ಜಂಜಾಟಗಳಿಂದ ಮುಕ್ತವಾಗಿ ಆಡಳಿತ ನಡೆಸಲು ಸಾಧ್ಯವಾಗಬಹುದೆಂಬ ನಿರೀಕ್ಷೆ ಇತ್ತು.

ಆಡಳಿತ ಸೂತ್ರ ಕೈಯಲ್ಲಿದ್ದರೂ ರಾಜಕೀಯ ಅಧಿಕಾರ ಇಲ್ಲದ ನಾಯಕ ಎಷ್ಟೇ ಸಮರ್ಥನಾಗಿದ್ದರೂ ಹೇಗೆ ಅಸಹಾಯಕ ಮತ್ತು ನಿಷ್ಪ್ರಯೋಜಕನಾಗುತ್ತಾನೆ ಎನ್ನುವುದಕ್ಕೆ ಮನಮೋಹನ್‌ಸಿಂಗ್ ಸಾಕ್ಷಿ.
ಸೋನಿಯಾ ಗಾಂಧಿಯವರ ಈ ಪಾತ್ರ ನಿರ್ವಹಣೆ ಕೂಡಾ ಸಂವಿಧಾನೇತರ ಶಕ್ತಿಯ ನಿಯಂತ್ರಣ ಅಲ್ಲ ಎಂದು ತಳ್ಳಿಹಾಕಬಹುದು. ಆದರೆ, ಅವರ ಪಾತ್ರ ಅಷ್ಟಕ್ಕೆ ಕೊನೆಗೊಂಡಿಲ್ಲ.
`ಸೂಪರ್ ಕ್ಯಾಬಿನೆಟ್~ ಎಂಬ ಆರೋಪಕ್ಕೊಳಗಾಗಿರುವ `ರಾಷ್ಟ್ರೀಯ ಸಲಹಾ ಮಂಡಳಿ~ಯನ್ನು (ಎನ್‌ಎಸಿ) ಅವರು ಹುಟ್ಟು ಹಾಕಿದ್ದಾರೆ. ಅದಕ್ಕೆ ಅವರೇ ಅಧ್ಯಕ್ಷರು. ಎಂಎನ್‌ಆರ್‌ಇಜಿಪಿ, ಮಾಹಿತಿ ಹಕ್ಕು, ಅರಣ್ಯ ಹಕ್ಕು, ಶಿಕ್ಷಣದ ಹಕ್ಕು, ಭೂ ಸ್ವಾಧೀನ ಮತ್ತು ಪುನರ್ವಸತಿ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮೊದಲಾದ ಪ್ರಮುಖ ವಿಷಯಗಳಿಗೆ ಸಂಬಂಧಿಸಿದ ಕಾನೂನಿನ ಕರಡುಗಳನ್ನು ರೂಪಿಸಿದ್ದು ಯುಪಿಎ ಸರ್ಕಾರವಲ್ಲ, ಅದು ಎನ್‌ಎಸಿ.
ಇತ್ತೀಚೆಗೆ ವಿವಾದ ಸೃಷ್ಟಿಸಿರುವ ಕೋಮು ಹಿಂಸೆ ನಿಯಂತ್ರಣ ಮಸೂದೆ ರಚಿಸಿರುವುದು ಎನ್‌ಎಸಿ. ಶಾಸನ ರಚನೆಗಾಗಿಯೇ ಶಾಸಕಾಂಗ ಇರುವಾಗ ಅದಕ್ಕೆ ಪರ‌್ಯಾಯವಾಗಿ ಇಂತಹ ಸಂಸ್ಥೆಯೊಂದನ್ನು ಹುಟ್ಟುಹಾಕಿ ಕಾಂಗ್ರೆಸ್ ಪಕ್ಷದೊಳಗೂ ಸಂವಿಧಾನೇತರ ಸಂಸ್ಥೆಯ ಪ್ರವೇಶಕ್ಕೆ ಸೋನಿಯಾಗಾಂಧಿ ದಾರಿಮಾಡಿಕೊಟ್ಟಿದ್ದಾರೆ.
ಇದರಲ್ಲಿ ಸದಸ್ಯರಾಗಿರುವವರಲ್ಲಿ ಹೆಚ್ಚಿನವರು ಸರ್ಕಾರೇತರ ಸೇವಾ ಸಂಸ್ಥೆಗಳ (ಎನ್‌ಜಿಒ) ಜತೆ ತಮ್ಮನ್ನು ಗುರುತಿಸಿಕೊಂಡವರು. ಅಣ್ಣಾ ಹಜಾರೆ ನೇತೃತ್ವದ ನಾಗರಿಕ ಸಮಿತಿ ಮತ್ತು ಎನ್‌ಎಸಿ ಸದಸ್ಯರ ನಡುವೆ ಹಲವಾರು ಸಾಮ್ಯತೆಗಳಿವೆ.
ಈ ಎರಡೂ ಗುಂಪಿನ ಅನೇಕ ಸದಸ್ಯರು ರಾಜಕಾರಣಿಗಳನ್ನು ದ್ವೇಷಿಸುತ್ತಾರೆ, ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಇಷ್ಟಪಡುವುದಿಲ್ಲ, ಆದರೆ ತಮ್ಮ ಮಾತನ್ನು ಚುನಾಯಿತ ಸರ್ಕಾರ ಕೇಳಬೇಕೆಂದು ಬಯಸುತ್ತಾರೆ.
ಭ್ರಷ್ಟತೆ ಮತ್ತು ಅಸಾಮರ್ಥ್ಯಗಳ ಕಾರಣ ಸಹೋದ್ಯೋಗಿಗಳ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿರುವ ಸೋನಿಯಾಗಾಂಧಿ, ಈ `ಜೋಲಾವಾಲಾ~ಗಳ ಮೇಲೆ ಹೆಚ್ಚು ಹೆಚ್ಚು ಅವಲಂಬನೆಗೊಳಗಾದಂತೆ ಕಾಣಿಸುತ್ತಿದೆ.
ಸರ್ಕಾರ ಈಗ ಎದುರಿಸುತ್ತಿರುವ ಬಿಕ್ಕಟ್ಟಿಗೆ ಅಣ್ಣಾಹಜಾರೆ ನೇತೃತ್ವದ ನಾಗರಿಕ ಸಮಿತಿಯ ಸದಸ್ಯರು ಮತ್ತು ಎನ್‌ಎಸಿ ಸದಸ್ಯರ ನಡುವಿನ ವ್ಯಕ್ತಿ ಪ್ರತಿಷ್ಠೆಯ ಸಂಘರ್ಷವೂ ಕಾರಣ.

`ನಾಗರಿಕ ಸಮಿತಿ~ಗಳು ಚುನಾಯಿತ ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡುತ್ತಿದೆ ಎಂದು ಬೊಬ್ಬಿಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನದೇ ಸರ್ಕಾರದ ತಲೆಮೇಲೆ `ನಾಗರಿಕ ಸಮಿತಿ~ಯ ಇನ್ನೊಂದು ರೂಪವಾದ ಎನ್‌ಎಸಿಯನ್ನು ಕೂರಿಸಿರುವುದನ್ನು ಹೇಗೆ ಸಮರ್ಥಿಸಿಕೊಳ್ಳಲು ಸಾಧ್ಯ? ಇದರಿಂದ ಸಂಸದೀಯ ಪ್ರಜಾಪ್ರಭುತ್ವ ದುರ್ಬಲಗೊಳ್ಳುವುದಿಲ್ಲವೇ?
ಈ ರೀತಿ ಕಾಂಗ್ರೆಸ್ ಪಕ್ಷ ಬಿಜೆಪಿ ಹಿಂದೆ ಮಾಡಿದ್ದ ತಪ್ಪನ್ನೇ ಮಾಡುತ್ತಿದ್ದರೆ, ಅನುಭವದಿಂದ ಪಾಠ ಕಲಿಯದ ಬಿಜೆಪಿ ಹಳೆಯ ತಪ್ಪನ್ನೇ ಪುನರಾವರ್ತಿಸಲು ಹೊರಟಿದೆ.
ಜವಾಬ್ದಾರಿಯುತ ವಿರೋಧಪಕ್ಷವಾಗಿ ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಳುವ ಪಕ್ಷದ ಜತೆ ಮುಖಾಮುಖಿ ರಾಜಕೀಯ ಹೋರಾಟಕ್ಕಿಳಿಯಬೇಕಾದ ಬಿಜೆಪಿ ಬಾಬಾ ರಾಮ್‌ದೇವ್ ಅವರಂತಹವರ ಬೆನ್ನಹಿಂದೆ ನಿಂತು ರಾಜಕೀಯ ಮಾಡುತ್ತಿದೆ.
ಜನತೆಯ ಬೆಂಬಲದ ಮೂಲಕ ರಾಜಕೀಯ ಶಕ್ತಿಯನ್ನು ಗಳಿಸಬೇಕಾದ ಈ ರಾಜಕೀಯ ಪಕ್ಷ, ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಹತಾಶರಾಗಿರುವ ಒಬ್ಬ ಯೋಗಗುರುವಿನ ಮೂಲಕ ರಾಜಕೀಯ ಮರುಜನ್ಮ ಪಡೆಯುವ ವ್ಯರ್ಥ ಪ್ರಯತ್ನದಲ್ಲಿದೆ.
ತಮ್ಮ ಪಕ್ಷದ ನಾಯಕರಾದ ಎಲ್.ಕೆ.ಅಡ್ವಾಣಿ ಅವರು ರಾಮ್‌ದೇವ್‌ಗಿಂತಲೂ ಮೊದಲು ಕಪ್ಪುಹಣದ ವಿಷಯವನ್ನು ಸಾರ್ವಜನಿಕ ಚರ್ಚೆಯ ಅಂಗಳಕ್ಕೆ ಎಳೆದು ತಂದವರು ಎನ್ನುವುದನ್ನು ಬಿಜೆಪಿ ಮರೆತುಬಿಟ್ಟಂತೆ ಕಾಣುತ್ತಿದೆ.
ಸಮರ್ಥ ನಾಯಕರಿಲ್ಲದೆ ದುರ್ಬಲವಾಗಿರುವ ವಿರೋಧ ಪಕ್ಷವಾದ ಬಿಜೆಪಿ ಸಂವಿಧಾನೇತರ ಶಕ್ತಿಗಳಾದ ಸಂಘ ಪರಿವಾರ ಮತ್ತು ಸಾಧು-ಸಂತರಿಗೆ ಶರಣಾಗಿರುವುದು ಭವಿಷ್ಯದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಇನ್ನಷ್ಟು ದುರ್ಬಲಗೊಳ್ಳಲಿದೆ ಎನ್ನುವುದಕ್ಕೆ ಸೂಚನೆ. ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯಬೇಕಾಗಿರುವುದು ಈ ಕಾರಣಕ್ಕಾಗಿ.

Monday, June 6, 2011

ರಾಜಕೀಯ ಮೈದಾನದಲ್ಲಿ ಎಡವಿಬಿದ್ದ ಯೋಗಗುರು

ಯೋಗಗುರು ಬಾಬಾ ರಾಮ್‌ದೇವ್ ಅವರ ಜತೆ ಉಪವಾಸದಲ್ಲಿ ಪಾಲ್ಗೊಳ್ಳಲು ಹೋಗಿದ್ದ ಸಾವಿರಾರು ಸಂಖ್ಯೆಯ ಬೆಂಬಲಿಗರು ಎರಡು ಬಗೆಯ ನೋವಿನಿಂದ ನರಳುತ್ತಿರಬಹುದು.
ಒಂದು ಯುಪಿಎ ಸರ್ಕಾರ ನಡೆಸಿದ್ದ ಪೊಲೀಸ್ ಕಾರ‌್ಯಾಚರಣೆಯಿಂದಾಗಿ ದೇಹದ ಮೇಲೆ ಆಗಿರುವ ಗಾಯದ ನೋವು. ಇನ್ನೊಂದು ತಾವು ದೇವರೆಂದೇ ಬಗೆದಿರುವ ಯೋಗಗುರು, ತಾನು ಉಪವಾಸ ಕೈಬಿಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗುಟ್ಟಾಗಿ ಪತ್ರ ಕೊಡುವ ಮೂಲಕ ಮಾಡಿದ ವಿಶ್ವಾಸಘಾತದಿಂದ ಮನಸ್ಸಿಗಾದ ನೋವು.
ದೇಹದ ಮೇಲೆ ಆಗಿರುವ ನೋವಿನಷ್ಟು ಸುಲಭದಲ್ಲಿ ಮನಸ್ಸಿನ ಮೇಲಿನ ಗಾಯ ಗುಣವಾಗುವುದಿಲ್ಲ ಎಂದು ಹೇಳುತ್ತಾರೆ. ಬಾಬಾ ತನ್ನ ಯಾವ ಯೋಗಶಕ್ತಿಯ ಮೂಲಕ ಈ ನೋವನ್ನು ಶಮನಮಾಡಿ ಬೆಂಬಲಿಗರನ್ನು ಒಲಿಸಿಕೊಳ್ಳಲಿದ್ದಾರೆ ಎನ್ನುವುದನ್ನು ನೋಡಲು ಕೆಲವು ದಿನ ಕಾಯಬೇಕು.
ಯಾರದು ದೊಡ್ಡ ತಪ್ಪು ಎಂದು ತೀರ್ಮಾನಿಸುವುದು ಸ್ವಲ್ಪ ಕಷ್ಟ. ಆದರೆ ಒಬ್ಬ ಆರೋಪಿಯಿಂದ ಪ್ರಾಮಾಣಿಕತೆಯ ನಡವಳಿಕೆಯನ್ನು ನಿರೀಕ್ಷಿಸಲು ಸಾಧ್ಯವಾಗದು. ಆದರೆ ಆತನ ವಿರುದ್ಧ ನಿಂತವರು ಮಾತ್ರ ಅಪ್ರಾಮಾಣಿಕರಾಗಬಾರದು.

ಇಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿರುವುದು ಕೇಂದ್ರದ ಯುಪಿಎ ಸರ್ಕಾರ. ತನ್ನನ್ನು ರಕ್ಷಿಸಿಕೊಳ್ಳಲು ಯಾವುದೇ ಬಗೆಯ ಹೀನಕೃತ್ಯ ಎಸಗಲು ಹಿಂಜರಿಯದಿರುವುದು ಆರೋಪಿಯ ಸಹಜ ಸ್ವಭಾವ.
ಆದ್ದರಿಂದ ಬಾಬಾ ರಾಮ್‌ದೇವ್ ಅವರ ಆಮರಣ ಉಪವಾಸ ಸತ್ಯಾಗ್ರಹವನ್ನು ಭಂಗಗೊಳಿಸಲು ಯುಪಿಎ ಸರ್ಕಾರ ಸಂಚು ಮಾಡಿದ್ದರಲ್ಲಿ ಆಶ್ಚರ‌್ಯವೇನಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿ ಆತ್ಮವಿಶ್ವಾಸವನ್ನು ಕಳೆದುಕೊಂಡು ಹತಾಶೆಗೀಡಾದ ಸರ್ಕಾರ ಮಾತ್ರ ಇಂತಹ ಬರ್ಬರಕೃತ್ಯ ನಡೆಸಲು ಸಾಧ್ಯ.
ಇತ್ತೀಚೆಗೆ ಅಣ್ಣಾ ಹಜಾರೆ ಅವರ ಉಪವಾಸವನ್ನು ತಡೆಯಲು ಇದೇ ಸರ್ಕಾರ ನಡೆಸಿದ್ದ ಕರಾಮತ್ತುಗಳೇನು, ಲೋಕಪಾಲ ಮಸೂದೆ ರಚನೆಯ ಪ್ರಯತ್ನದ ಹಾದಿ ತಪ್ಪಿಸಲು ಅದು ಏನು ಮಾಡುತ್ತಿದೆ ಎನ್ನುವುದು ದೇಶದ ಜನರಿಗೆಲ್ಲ ಈಗ ತಿಳಿದಿದೆ.

ಇವೆಲ್ಲವೂ ಗೊತ್ತಿದ್ದೂ ಇಂತಹ ಸರ್ಕಾರದ ಜತೆ ವ್ಯವಹರಿಸುವಾಗ ಸ್ವಲ್ಪ ಎಚ್ಚರದಿಂದ ಇರುವುದು ಬೇಡವೇ? ಮಾನಸಿಕ ಒತ್ತಡದಿಂದ ಪಾರಾಗಲು ಯೋಗ ಮಾಡಿ ಎಂದು ಉಪದೇಶ ನೀಡುವ ಯೋಗಗುರು `ನಾನು ಒತ್ತಡಕ್ಕೆ ಸಿಕ್ಕಿ ಆ ಪತ್ರ ಬರೆದುಕೊಟ್ಟೆ~ ಎಂದು ಹೇಳಿದರೆ, ಅವರು ಹೇಳಿದ್ದನ್ನೆಲ್ಲ ನಂಬಿರುವ ಅನುಯಾಯಿಗಳು ಏನು ಮಾಡಬೇಕು?
ಇಂತಹ ವಿವಾದಗಳು ಬಾಬಾ ರಾಮ್‌ದೇವ್ ಪಾಲಿಗೆ ಹೊಸದೇನಲ್ಲ, ಅವರ ಜನಪ್ರಿಯತೆಯ ಸೌಧ ದಿನದಿಂದ ದಿನಕ್ಕೆ ಎತ್ತರಕ್ಕೆ ಏರುತ್ತಿರುವ ಜತೆಯಲ್ಲಿಯೇ ವಿವಾದಗಳ ಹುತ್ತ ಕೂಡಾ ಪಕ್ಕದಲ್ಲಿ ಬೆಳೆಯುತ್ತಿದೆ.
ಕಪ್ಪುಹಣದ ವಿರುದ್ಧ ಯೋಗಗುರು ಬಾಬಾ ರಾಮ್‌ದೇವ್ ಎತ್ತಿರುವ ದನಿ ಸರಿಯಾಗಿಯೇ ಇದೆ. ಕಳೆದ 8-9 ತಿಂಗಳುಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡಿ ಕಪ್ಪುಹಣದ ವಿರುದ್ಧ ಜನರನ್ನು ಸಂಘಟಿಸಿರುವ ಅವರ ಶ್ರಮ ಕೂಡಾ ಮೆಚ್ಚುವಂತಹದ್ದೇ ಆಗಿದೆ.
ಇವೆಲ್ಲವನ್ನು ಸುಮ್ಮನೆ ನೋಡುತ್ತಾ ಕಾಲಹರಣ ಮಾಡುತ್ತಿದ್ದ ಕೇಂದ್ರ ಸರ್ಕಾರವನ್ನು ಮಣಿಸಲು ಅವರು ಕೈಗೊಂಡಿರುವ ಆಮರಣ ಉಪವಾಸ ಕೂಡಾ ದೇಶಕ್ಕೆ ಹೊಸತೇನಲ್ಲ. ಅದರ ಬಲದಿಂದಲೇ ಅಲ್ಲವೇ ನಾವು ಬ್ರಿಟಿಷರ ಗುಲಾಮಗಿರಿಯಿಂದ ಬಿಡುಗಡೆ ಪಡೆದು ಸ್ವತಂತ್ರರಾಗಿದ್ದು.
ಇಂತಹ ಶಕ್ತಿಶಾಲಿ ಅಸ್ತ್ರವನ್ನು ಬಾಬಾ ರಾಮ್‌ದೇವ್ ಪ್ರಯೋಗಿಸಿದ್ದರಲ್ಲಿಯೂ ತಪ್ಪೇನಿಲ್ಲ. ಇವಿಷ್ಟೇ ಬಾಬಾ ರಾಮ್‌ದೇವ್ ಆಗಿದ್ದರೆ ಇಡೀ ದೇಶ ಅವರ ಕಾಲಿಗೆ ಬೀಳಬೇಕು. ಆದರೆ `ಬಾಬಾ ರಾಮ್‌ದೇವ್ ಅಂದರೆ ಇಷ್ಟೇ ಅಲ್ಲ~ ಎನ್ನುವ ಗುಮಾನಿಯೇ ಅವರ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳುವಂತೆ ಮಾಡಿದೆ.
ಮೊದಲನೆಯದು ಅವರ ರಾಜಕೀಯ ನಿಲುವು. ಕಳೆದ ವರ್ಷ ಬಾಬಾ ರಾಮ್‌ದೇವ್ ಅವರು ರಾಜಕೀಯ ಪಕ್ಷವೊಂದನ್ನು ಸ್ಥಾಪಿಸುವ ಉದ್ದೇಶವನ್ನು ಬಹಿರಂಗಪಡಿಸಿದ್ದರು. ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಅವರು ಘೋಷಿಸಿದ್ದರು. ಇದರಲ್ಲಿಯೂ ತಪ್ಪೇನಿಲ್ಲ. ಅವರ ಇತ್ತೀಚಿನ ಯೋಗ ಶಿಬಿರಗಳಲ್ಲಿ ಯೋಗಕ್ಕಿಂತ ಹೆಚ್ಚು ದೇಶದ ರಾಜಕೀಯದ ಬಗ್ಗೆಯೇ ಅವರು ಹೆಚ್ಚು ಚರ್ಚಿಸುತ್ತಿದ್ದರು.
ಎಲ್ಲ ಪಕ್ಷಗಳು ಭ್ರಷ್ಟಗೊಂಡಿರುವ ವರ್ತಮಾನದ ಸ್ಥಿತಿಯಲ್ಲಿ ಹೊಸ ಬಗೆಯ ರಾಜಕೀಯದ ಅಗತ್ಯ ಇದ್ದ ಕಾರಣ ಆ ಚರ್ಚೆ ಕೂಡಾ ಪ್ರಸ್ತುತವಾಗಿತ್ತು. ಈ ಎಲ್ಲ ಪ್ರಯತ್ನಗಳು ರಾಜಕೀಯ ಪಕ್ಷವೊಂದರ ಸ್ಥಾಪನೆಯಲ್ಲಿ ತಾರ್ಕಿಕ ಅಂತ್ಯ ಕಾಣಬಹುದೆಂದು ಅವರ ಲಕ್ಷಾಂತರ ಅನುಯಾಯಿಗಳು ಮತ್ತು ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಇದ್ದಕ್ಕಿದ್ದಂತೆ ಒಂದು ದಿನ `ನಾನು ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಿಲ್ಲ, ಯುವಜನರ ಸಂಘಟನೆ ಕಟ್ಟುತ್ತೇನೆ~ ಎಂದು ಘೋಷಿಸಿದರು. ಕೊನೆಗೆ ಎರಡನ್ನೂ ಕೈಬಿಟ್ಟು ಉಪವಾಸ ಸತ್ಯಾಗ್ರಹ ನಡೆಸಲು ಹೊರಟರು. ಈ ಬದಲಾದ ನಿಲುವಿನ ಹಿಂದಿನ ಲೆಕ್ಕಾಚಾರ ಏನು? ಹೊಸಪಕ್ಷದ ಬದಲಿಗೆ ಯಾವುದಾದರೂ ಹಳೆಯ ಪಕ್ಷವನ್ನು ಬೆಂಬಲಿಸುವ ಯೋಚನೆಯೇನಾದರೂ ಅವರಲ್ಲಿದೆಯೇ?
ಎರಡನೆಯದು ಅವರು ಆರಿಸಿಕೊಂಡ ಉಪವಾಸ ಸತ್ಯಾಗ್ರಹದ ಮಾರ್ಗ. ಅಶ್ಚರ‌್ಯವೆಂದರೆ ಸಮಾಜ ಸೇವಕ ಅಣ್ಣಾ ಹಜಾರೆ ಅವರು ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ವರೆಗೆ ಬಾಬಾ ರಾಮ್‌ದೇವ್ ಎಂದೂ ಉಪವಾಸ ಸತ್ಯಾಗ್ರಹದ ಬಗ್ಗೆ ಮಾತನಾಡಿರಲಿಲ್ಲ.
ಬಹುಶಃ ಅಂತಹದ್ದೊಂದು ಉದ್ದೇಶ ಅವರಲ್ಲಿತ್ತು ಎಂದು ಗೊತ್ತಿದ್ದರೆ ಅಣ್ಣಾ ಹಜಾರೆ ಅವರು ಪ್ರತ್ಯೇಕವಾಗಿ ಉಪವಾಸ ಕೂರುತ್ತಿರಲಿಲ್ಲವೇನೋ? ಇಬ್ಬರೂ ಕೂಡಿ ಉಪವಾಸ ಕೂತಿದ್ದರೆ ಭ್ರಷ್ಟಾಚಾರದ ವಿರುದ್ಧ ಸಿಡಿದು ನಿಂತಿರುವ ಜನ ಎರಡು ಶಿಬಿರಗಳಲ್ಲಿ ಹಂಚಿಹೋಗುತ್ತಿರಲಿಲ್ಲವೇನೋ? ಬಾಬಾ ರಾಮ್‌ದೇವ್ ಅವರ ಕೆಲವು ಬೇಡಿಕೆಗಳು ಲೋಕಪಾಲ ಮಸೂದೆಯ ವ್ಯಾಪ್ತಿಯಲ್ಲಿಯೇ ಬರುವುದರಿಂದ ಅದು ಅಂತಿಮ ರೂಪ ಪಡೆಯುವ ವರೆಗಾದರೂ ಅವರು ಕಾಯಬಹುದಿತ್ತು.

ಆದರೆ ಬಾಬಾ ರಾಮ್‌ದೇವ್ ಅವಸರದಲ್ಲಿದ್ದರು. ಯಾಕೆ? ಮೈತುಂಬಾ ಬಟ್ಟೆ ಧರಿಸಿರುವ ಅಣ್ಣಾಹಜಾರೆ ಎದುರು ಅರೆಬೆತ್ತಲೆಯಾಗಿರುವ ಯೋಗಗುರುವನ್ನು ಕಾಡಿದ ಅಭದ್ರತೆಯಾದರೂ ಯಾವುದು? ಭ್ರಷ್ಟಾಚಾರದ ವಿರುದ್ಧದ ಹೋರಾಟದ ನಾಯಕತ್ವ ಕೈತಪ್ಪಿ ಹೋಗಬಹುದೆಂಬ ಹತಾಶೆಯಿಂದ ಅವರು ಪೈಪೋಟಿಗಿಳಿದರೇ?
ಮೂರನೆಯದು ಅವರ ಸ್ನೇಹಿತರ ಬಳಗ. ಒಬ್ಬ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಬೇಕಾದರೆ ಆತನ ಸ್ನೇಹಿತರ ಬಗ್ಗೆ ತಿಳಿದುಕೊಂಡರೆ ಸಾಕು ಎನ್ನುತ್ತಾರೆ. ಅಣ್ಣಾ ಹಜಾರೆ ಅವರ ಸ್ನೇಹಿತರು ಯಾರು ಎನ್ನುವುದು ಇಡೀ ದೇಶಕ್ಕೆ ಗೊತ್ತು. ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಹಿರಿಯ ವಕೀಲರಾದ ಶಾಂತಿಭೂಷಣ್ ಮತ್ತು ಪ್ರಶಾಂತ್ ಭೂಷಣ್, ಅರವಿಂದ ಕೇಜ್ರಿವಾಲಾ, ಕಿರಣ್‌ಬೇಡಿ, ಸ್ವಾಮಿ ಅಗ್ನಿವೇಶ್...ಇವರೆಲ್ಲ ದೇಶದ ಜನಕ್ಕೆ ಪರಿಚಿತರು.
ಆದರೆ ಬಾಬಾ ರಾಮ್‌ದೇವ್ ಸ್ನೇಹಿತರು ಯಾರು? ಅವರ‌್ಯಾಕೆ ಬಹಿರಂಗವಾಗಿ ಜತೆಯಲ್ಲಿ ಕಾಣಿಸುತ್ತಿಲ್ಲ. ಬಿಜೆಪಿಯ ಮಾಜಿ ಐಡಲಾಗ್ ಗೋವಿಂದಾಚಾರ್ಯ ಇಲ್ಲವೇ ಸಂಘ ಪರಿವಾರದ ಹಿತಚಿಂತಕ ಎಸ್.ಗುರುಮೂರ್ತಿ ಅವರು ಉಪವಾಸದ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿಲ್ಲ.
ಪ್ರಾಂತೀಯ ಸಂಚಾಲಕರಿಗೆ ಪತ್ರಬರೆದು ಬಾಬಾ ರಾಮ್‌ದೇವ್ ಉಪವಾಸದಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಿರುವ ಆರ್‌ಎಸ್‌ಎಸ್ ಸರಸಂಘಚಾಲಕರೂ ಕೂಡಾ ರಾಮ್‌ದೇವ್ ಅವರನ್ನು ಬೆಂಬಲಿಸಿ ಬೀದಿಗೆ ಇಳಿದಿಲ್ಲ. ಆದರೆ ಇದ್ದಕ್ಕಿದ್ದಂತೆಯೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿ ಸಾಧ್ವಿ ರಿತಂಬರ ಉಪವಾಸದ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.
ಅಣ್ಣಾಹಜಾರೆ ಅವರ ಕೆಲವು ಸಂಗಾತಿಗಳೂ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರಬಹುದು. ಆದರೆ ಅವರೆಲ್ಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವವರು, ಜನರ ಕಣ್ಣ ಮುಂದೆ ಇರುವವರು. ಅಣ್ಣಾ ಹಜಾರೆ ಅವರಿಗೆ ತನ್ನ ಸಂಗಡಿಗರ ಆಯ್ಕೆಯಲ್ಲಿ ಸ್ಪಷ್ಟತೆ ಇತ್ತು. ತಪ್ಪಾಗಿದ್ದನ್ನು ತಿದ್ದಿಕೊಳ್ಳುವ ವಿನಯವಂತಿಕೆಯೂ ಇತ್ತು (ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರನ್ನು ಬೆಂಬಲಿಸಿ ಮಾತನಾಡಿದ ಅವರು ಅಲ್ಲಿ ಹೋಗಿ ಕಣ್ಣಾರೆ ಕಂಡ ನಂತರ ನಿಲುವು ಬದಲಾಯಿಸಿದರು).

ಅವರು ಯಾವ ರಾಜಕಾರಣಿಯನ್ನೂ ಹತ್ತಿರ ಬಿಟ್ಟುಕೊಳ್ಳಲಿಲ್ಲ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರೇ ನಿರಾಶೆಯಿಂದ ಹಿಂದಿರುಗಿ ಹೋಗಬೇಕಾಯಿತು. ಆದರೆ ಬಾಬಾ ರಾಮ್‌ದೇವ್ ಅವರಿಗೆ ಒಂದೋ ತಮ್ಮ ಸಂಗಾತಿಗಳ ಆಯ್ಕೆ ಬಗ್ಗೆ ಸ್ಪಷ್ಟತೆ ಇಲ್ಲ, ಇಲ್ಲವೇ ಅವರಲ್ಲೊಂದು ರಹಸ್ಯ ಅಜೆಂಡಾ ಇದೆ. ಹೀಗೆ ಅಲ್ಲದೆ ಇದ್ದರೆ ಅವರು ಯಾಕೆ ತನ್ನನ್ನು ಬೆಂಬಲಿಸುತ್ತಿರುವ ಗಣ್ಯರನ್ನು ಬೆನ್ನಹಿಂದೆ ಬಚ್ಚಿಟ್ಟುಕೊಳ್ಳುತ್ತಿದ್ದಾರೆ?

ನಾಲ್ಕನೆಯದು ಸಂಘಪರಿವಾರದ ಜತೆಗಿನ ಸಂಬಂಧ. ಆರ್‌ಎಸ್‌ಎಸ್, ವಿಶ್ವಹಿಂದು ಪರಿಷತ್, ಬಿಜೆಪಿ ಇಲ್ಲವೇ ಸಂಘಪರಿವಾರಕ್ಕೆ ಸೇರಿರುವ ಇನ್ನಾವುದೋ ಸಂಘಟನೆಯ ಜತೆ  ಗುರುತಿಸಿಕೊಳ್ಳುವುದು ತಪ್ಪೇನಲ್ಲ. ಇವುಗಳಲ್ಲಿ ಯಾವುದೂ ದೇಶದ್ರೋಹದ ಆರೋಪವನ್ನು ಎದುರಿಸುತ್ತಿಲ್ಲ. ಇವುಗಳು ಭಯೋತ್ಪಾದಕ ಸಂಘಟನೆಗಳೂ ಅಲ್ಲ.
ಆದರೆ ಒಂದು ಸಂಘಟನೆಯ ಜತೆ ಗುರುತಿಸಿಕೊಂಡ ನಂತರ ಅದರ ಸಿದ್ದಾಂತದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆರ್‌ಎಸ್‌ಎಸ್ ಸಿದ್ಧಾಂತವನ್ನು ಬಾಬಾ ರಾಮ್‌ದೇವ್ ಒಪ್ಪುವುದಾಗಿದ್ದರೆ ಬಹಿರಂಗವಾಗಿ ಅದನ್ನು ಘೋಷಿಸಬೇಕಿತ್ತು.
ಆರ್‌ಎಸ್‌ಎಸ್ ತನ್ನ ಕಾರ‌್ಯಕ್ರಮಗಳಲ್ಲಿ ಒಬ್ಬ ಮೌಲ್ವಿಯನ್ನೋ, ಪಾದ್ರಿಯನ್ನೋ ವೇದಿಕೆಯಲ್ಲಿ ತಂದು ನಿಲ್ಲಿಸಿ ಭಾಷಣ ಮಾಡಿಸುವುದಿಲ್ಲ. ಅಷ್ಟರಮಟ್ಟಿಗೆ ಅದಕ್ಕೆ ಸೈದ್ಧಾಂತಿಕ ಸ್ಪಷ್ಟತೆ ಇದೆ. ಬಾಬಾ ರಾಮ್‌ದೇವ್ ಅವರಿಗೆ ಹಿಂದುತ್ವ ಬ್ರಿಗೇಡ್‌ನ ಬೆಂಬಲವೂ ಬೇಕು, ಜಾತ್ಯತೀತ ಎನ್ನುವು ಹಣೆಪಟ್ಟಿಯೂ ಬೇಕು. ಇದು ಹೇಗೆ ಸಾಧ್ಯ?
ಐದನೆಯದು ಅವರ ಆಸ್ತಿ. ಬಾಬಾ ರಾಮ್‌ದೇವ್ ಗಳಿಸಿರುವ ಆಸ್ತಿಯ ಮೊತ್ತ ಎಷ್ಟೆಂದು ಅವರಿಗಾದರೂ ನಿಖರವಾಗಿ ಗೊತ್ತಿದೆಯೋ ಇಲ್ಲವೋ? ಜನರ ಬಾಯಲ್ಲಿ ಈ ಲೆಕ್ಕಾಚಾರ ಒಂದು ಸಾವಿರ ಕೋಟಿಯಿಂದ ಹತ್ತುಸಾವಿರ ಕೋಟಿ ರೂಪಾಯಿಗಳ ವರೆಗೆ ಹರಿದಾಡುತ್ತಿದೆ. ಇವೆಲ್ಲವೂ ಕಳೆದ ಹದಿನೈದು ವರ್ಷಗಳ ಸಂಪಾದನೆ.

ದುಡ್ಡು ಸಂಪಾದನೆ ಮಾಡುವುದು ಅಪರಾಧ ಅಲ್ಲವೇ ಅಲ್ಲ. ಆದರೆ ದುಡ್ಡು ಗಳಿಸುವುದೇ ವೃತ್ತಿ ಮಾಡಿಕೊಂಡವರು ಸಮಾಜಸೇವಕ ಎಂದು ಅನಿಸಿಕೊಳ್ಳುವುದಿಲ್ಲ, ಆತನೊಬ್ಬ ವ್ಯಾಪಾರಿ ಅಷ್ಟೆ. ಆದರೆ ಬಾಬಾ ರಾಮ್‌ದೇವ್ ಅವರದು ದ್ವಿಪಾತ್ರ. ಅವರು ಯೋಗ ಶಿಬಿರ ಮತ್ತು ಔಷಧಿ ಮಾರಾಟದಿಂದಲೇ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಸಂಪಾದನೆ ಮಾಡುತ್ತಾರೆ.

ಸಾವಿರಾರು ಎಕರೆ ಜಮೀನು ಖರೀದಿಸಿದ್ದಾರೆ, ಖಾಸಗಿ ವಿಮಾನದಲ್ಲಿ ಓಡಾಡುತ್ತಾರೆ.ಪ್ರಾರಂಭದ ದಿನಗಳಲ್ಲಿ ಪವಾಡಗಳನ್ನು ಮಾಡುತ್ತಾ ವಿವಾದಕ್ಕೆ ಸಿಲುಕಿದ್ದ ಸತ್ಯಸಾಯಿಬಾಬಾ ಸಾಯುವ ಹೊತ್ತಿಗೆ ಎಲ್ಲರ ಅಭಿಮಾನಕ್ಕೆ ಪಾತ್ರವಾಗಿದ್ದು ಅವರು ಪ್ರಾರಂಭಿಸಿದ ಸಾಮಾಜಿಕ ಸೇವಾ ಕಾರ‌್ಯಗಳಿಂದಾಗಿ.
ಅಂತಹ ಯಾವುದೇ ಒಂದು ಯೋಜನೆಯನ್ನು ಬಾಬಾ ರಾಮ್‌ದೇವ್ ಪ್ರಾರಂಭಿಸಿದಂತಿಲ್ಲ. ತನ್ನದೆನ್ನುವುದನ್ನು ಏನನ್ನೂ ಇಟ್ಟುಕೊಳ್ಳದೆ ಫಕೀರನಂತೆ ಬದುಕುತ್ತಿರುವ ಅಣ್ಣಾ ಹಜಾರೆ ಜತೆಯಲ್ಲಿ ನಿಂತಿರುವ ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿರುವ ಬಾಬಾ ರಾಮ್‌ದೇವ್ ಅವರನ್ನು ಏನೆಂದು ಕರೆಯುವುದು?

ಸಮಾಜಸೇವಕನೆಂದೇ? ಸರ್ವಸಂಗ ಪರಿತ್ಯಾಗಿ ಬೈರಾಗಿಯೆಂದೇ?
ಕೊನೆಯದಾಗಿ ಅವರ ಎಡೆಬಿಡಂಗಿತನದ ಹೇಳಿಕೆಗಳು. ಅಣ್ಣಾ ಹಜಾರೆ ಅವರ ಉಪವಾಸ ಸತ್ಯಾಗ್ರಹಕ್ಕೆ ಮಣಿದು ಲೋಕಪಾಲ ಮಸೂದೆ ರಚನೆಗೆ ಸಮಿತಿ ರಚಿಸಿದಾಗ ಅದರಲ್ಲಿದ್ದ ನಾಗರಿಕ ಸಮಿತಿ ಸದಸ್ಯರ ಬಗ್ಗೆ ಮೊದಲು ಅಪಸ್ವರ ಎತ್ತಿದ್ದು ಬಾಬಾ ರಾಮ್‌ದೇವ್.

ಶಾಂತಿಭೂಷಣ್ ಮತ್ತು ಅವರ ಮಗ ಪ್ರಶಾಂತ್ ಭೂಷಣ್ ಇಬ್ಬರೂ ಸದಸ್ಯರಾಗಿದ್ದನ್ನು ಅವರು ಟೀಕಿಸಿದರು. ಒಂದೆಡೆ ಲೋಕಪಾಲ ಮಸೂದೆಯ ವ್ಯಾಪ್ತಿಯಲ್ಲಿ ಪ್ರಧಾನಿಯವರನ್ನೂ ಸೇರಿಸಲು ನಾಗರಿಕ ಸಮಿತಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ ಬಾಬಾ ರಾಮ್‌ದೇವ್ ಅದಕ್ಕೆ ವಿರುದ್ದವಾದ ಹೇಳಿಕೆ ನೀಡಿ ಸರ್ಕಾರದ ಬೆಂಬಲಕ್ಕೆ ನಿಂತರು. ಸಂವಿಧಾನದಿಂದ ಹಿಡಿದು ಸಲಿಂಗಕಾಮಿಗಳ ವರೆಗೆ ಅವರು ನೀಡಿರುವ ಹಲವಾರು ಹೇಳಿಕೆಗಳು ವಿವಾದ ಸೃಷ್ಟಿಸಿವೆ. ಇದು ಒಬ್ಬ ಸಮರ್ಥ ನಾಯಕನ ಲಕ್ಷಣ ಅಲ್ಲ.
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಮತದಾನವಷ್ಟೇ ರಹಸ್ಯ, ಉಳಿದೆಲ್ಲವೂ ಬಹಿರಂಗವಾಗಿ ನಡೆಯಬೇಕು. ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಈ ವ್ಯವಸ್ಥೆಯ ಜೀವಾಳ. ಜನರ ನಂಬಿಕೆ ಗಳಿಸಲು ಇದು ಅಗತ್ಯ. ಬಾಬಾ ರಾಮ್‌ದೇವ್ ಅವರ ನಡೆ-ನುಡಿಯಲ್ಲಿ ಇದರ ಕೊರತೆ ಇದೆ.

Monday, May 30, 2011

ಒಂದು ಕಲ್ಲಿಗೆ ಎರಡು ಹಕ್ಕಿ- ಇದು ಸುಷ್ಮಾ ತಂತ್ರ

`ದೈತ್ಯರ~ ನಿರ್ಗಮನವಾದ ನಂತರ `ಕುಬ್ಜ~ರ ಪಾಲಾದ ಭಾರತೀಯ ಜನತಾ ಪಕ್ಷದಲ್ಲಿ ಇಂತಹದ್ದೊಂದು `ಆಂತರಿಕ ಯುದ್ಧ~ ತೀರಾ ಅನಿರೀಕ್ಷಿತವಾದುದೇನಲ್ಲ.
ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕಿಯಾಗಿರುವ ಸುಷ್ಮಾ ಸ್ವರಾಜ್ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ಅರುಣ್ ಜೇಟ್ಲಿ ನಡುವೆ ಮುಸುಕಿನೊಳಗಿನ ಗುದ್ದಾಟ ಬಹಳ ದಿನಗಳಿಂದಲೇ ನಡೆಯುತ್ತಿತ್ತು, ಈಗ ಬೀದಿಗೆ ಬಂದಿದೆ.
ಸುಷ್ಮಾ ಸ್ವರಾಜ್ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನ ಮಾಡಿದ್ದಾರೆ. ಬಳ್ಳಾರಿಯ ರೆಡ್ಡಿ ಸೋದರರ ಜತೆಗೆ ತನಗೆ ಸಂಬಂಧ ಇಲ್ಲ ಎನ್ನುವುದನ್ನು ಹೊರಜಗತ್ತಿನ ಕಣ್ಣಿಗಾದರೂ ಅವರು ತೋರಿಸಿಕೊಳ್ಳಬೇಕಿತ್ತು, ಇದೇ ವೇಳೆ ಪಕ್ಷದೊಳಗೆ ತನ್ನ ಎದುರಾಳಿಯಾಗಿರುವ ಅರುಣ್ ಜೇಟ್ಲಿ ಮೈಮೇಲೆ ಒಂದಷ್ಟು ಕೆಸರು ಸಿಡಿಸಬೇಕಿತ್ತು. ಈ ಎರಡೂ ಕೆಲಸವನ್ನು ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಮಾಡಿ ಮುಗಿಸಿದ್ದಾರೆ.
ರೆಡ್ಡಿ ಸೋದರರ  ಮೇಲಿನ ಅಕ್ರಮ ಗಣಿಗಾರಿಕೆಯ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ನಡೆಸುತ್ತಿರುವ ವಿಚಾರಣೆಯ ಉರುಳು ದಿನದಿಂದ ದಿನಕ್ಕೆ ಬಿಗಿಗೊಳ್ಳುತ್ತಿದೆ. ಸಿಬಿಐ ಕೂಡಾ ಬೆನ್ನು ಹತ್ತಿದೆ.
ಇದೇ ಕಾಲಕ್ಕೆ ಸರಿಯಾಗಿ ಕರ್ನಾಟಕದ ಲೋಕಾಯುಕ್ತರು ಅಕ್ರಮ ಗಣಿಗಾರಿಕೆ ಬಗ್ಗೆ ಅಂತಿಮ ವರದಿ ಸಲ್ಲಿಸುವ ತಯಾರಿಯಲ್ಲಿದ್ದಾರೆ. ಅದರಲ್ಲೇನಾದರೂ ರೆಡ್ಡಿ ಸೋದರರು ಸಿಕ್ಕಿಹಾಕಿಕೊಂಡರೆ ಅವರ ಪಾಲಿಗೆ `ಅಮ್ಮ~ನಾಗಿರುವ ಸುಷ್ಮಾ ಸ್ವರಾಜ್ ಮೇಲೆ ಕಾಂಗ್ರೆಸ್ ಎರಗಿಬೀಳುವುದು ಖಂಡಿತ. ಅಂತಹ ಸಂದರ್ಭದಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಅವರು ಮುಜುಗರದ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು.
ಈ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ `ನಿರೀಕ್ಷಣಾ ಜಾಮೀನು~ ಪಡೆಯುವ ರೀತಿಯಲ್ಲಿ ರೆಡ್ಡಿ ಸೋದರರ ಜತೆಗಿನ ತಮ್ಮ ಸಂಬಂಧವನ್ನು ಕಡಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಹೆಚ್ಚು ಕಡಿಮೆ ಕಳೆದ 10-12 ವರ್ಷಗಳಿಂದ ಈ `ಅಮ್ಮ-ಮಕ್ಕಳ~ ಸಂಬಂಧ ನೋಡುತ್ತಾ ಬಂದವರು ಸುಲಭದಲ್ಲಿ ಸುಷ್ಮಾ ಅವರ ಬದಲಾದ ನುಡಿಯನ್ನು ಒಪ್ಪಲಾರರು.  ಆದರೆ ಆರೋಪ ಎದುರಾದ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಸುಷ್ಮಾ ಈ ಹೇಳಿಕೆಯನ್ನು ಬಳಸಿಕೊಳ್ಳಲು ಅಡ್ಡಿಯೇನು ಇಲ್ಲವಲ್ಲ?
ರೆಡ್ಡಿ ಸೋದರರ ಬಗ್ಗೆಯಷ್ಟೇ ಸುಷ್ಮಾ ಮಾತನಾಡಿದ್ದರೆ ಅದೇನು ದೊಡ್ಡ ಸುದ್ದಿಯಾಗುತ್ತಿರಲಿಲ್ಲ, ಆದರೆ ಅವರು ತನ್ನ ಬಿಚ್ಚುಮಾತುಗಳನ್ನು ಅಷ್ಟಕ್ಕೆ ನಿಲ್ಲಿಸದೆ ಅರುಣ್ ಜೇಟ್ಲಿ ಅವರನ್ನು ವಿವಾದದ ಮೈದಾನಕ್ಕೆ ಎಳೆದು ತಂದಿದ್ದಾರೆ. ಮೇಲ್ನೋಟಕ್ಕೆ ಇವರಿಬ್ಬರ ನಡುವಿನ ಸಂಘರ್ಷಕ್ಕೆ ಕಾರಣಗಳೇನು ಕಾಣುತ್ತಿಲ್ಲ.

ಸೋತ ರಾಜಕೀಯ ಪಕ್ಷದ ಪಾಲಿಗೆ ಇರುವ ಏಕೈಕ ಅಧಿಕಾರದ ಸ್ಥಾನ ವಿರೋಧಪಕ್ಷದ ನಾಯಕತ್ವ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿರುವ ಈ ಸ್ಥಾನಗಳನ್ನು ಸುಷ್ಮಾ ಮತ್ತು ಜೇಟ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಇಚ್ಚಿಸಿದರೂ ಒಬ್ಬರು ಮತ್ತೊಬ್ಬರ ಸ್ಥಾನವನ್ನು ಆಕ್ರಮಿಸಿಕೊಳ್ಳಲು ಸಾಧ್ಯ ಇಲ್ಲ. ಅದಕ್ಕಿಂತ ದೊಡ್ಡ ಸ್ಥಾನಕ್ಕೇರಬೇಕೆಂದರೂ ಅಲ್ಲಿ ಈಗ ಯಾವುದೂ ಇಲ್ಲ. ಹೀಗಿದ್ದರೂ ಸುಷ್ಮಾ ಸ್ವರಾಜ್ ಕಾಲು ಕೆರೆದು ಯಾಕೆ ಜಗಳಕ್ಕಿಳಿದಿದ್ದಾರೆ?
ಮುಂದಿನ ಲೋಕಸಭಾ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸೇನಾದರೂ ಅವರಿಗೆ ಬಿದ್ದಿದೆಯೇ? ಭ್ರಷ್ಟಾಚಾರದ ಹಗರಣಗಳಿಂದ ಮುಳುಗಿಹೋಗಿರುವ ಯುಪಿಎ ಜನಪ್ರಿಯತೆ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂತಹದ್ದೊಂದು ಕನಸು ಅವರಿಗೆ ಬಿದ್ದಿರಲೂ ಬಹುದು.
ಸುಷ್ಮಾ-ಜೇಟ್ಲಿ ಜಟಾಪಟಿ ಕೇವಲ ಅವರಿಬ್ಬರಿಗೆ ಸಂಬಂಧಿಸಿದ ವೈಯುಕ್ತಿಕ ವಿಷಯ ಅಲ್ಲ. ಅದರಲ್ಲಿ ಬಿಜೆಪಿಯ ಭವಿಷ್ಯದ ಬಿಕ್ಕಟ್ಟು ಕೂಡಾ ಅಡಗಿದೆ. ಬಿಜೆಪಿಯೊಳಗಿನ ನಾಯಕರ ನಡುವಿನ ತಿಕ್ಕಾಟ ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲಿನೊಂದಿಗೆ ಪ್ರಾರಂಭವಾಗಿತ್ತು. ಆ ಸೋಲು ಕಾಂಗ್ರೆಸ್‌ಪಕ್ಷಕ್ಕಿಂತ ಕೇವಲ 22 ಸ್ಥಾನಗಳು ಮತ್ತು ಶೇಕಡಾ 2.87ರಷ್ಟು ಮತಗಳನ್ನು ಕಡಿಮೆ ಪಡೆದುದಷ್ಟೇ ಅಲ್ಲ, ಅದಕ್ಕಿಂತಲೂ ದೊಡ್ಡದು.
ಯಾಕೆಂದರೆ ಸೋಲಿನ ಕಾಲಕ್ಕೆ ಸರಿಯಾಗಿ ಕಳೆದ 60 ವರ್ಷಗಳಲ್ಲಿ ಪಕ್ಷವನ್ನು (ಮೊದಲು ಜನಸಂಘ, ನಂತರ ಬಿಜೆಪಿ) ಕಟ್ಟಿ ಬೆಳೆಸಿ ಮುನ್ನಡೆಸಿದ್ದ ಇಬ್ಬರು ದೈತ್ಯ ನಾಯಕರಲ್ಲಿ ಒಬ್ಬರಾದ ಅಟಲಬಿಹಾರಿ ವಾಜಪೇಯಿ ರಾಜಕೀಯದಿಂದ ನಿವೃತ್ತಿಯಾದರು.
ಮತ್ತೊಬ್ಬ ನಾಯಕರಾದ ಲಾಲ್‌ಕೃಷ್ಣ ಅಡ್ವಾಣಿಯವರು  ಒಂದಷ್ಟು ದಿನ ವಿರೋಧಪಕ್ಷದ ನಾಯಕರಾಗಿ ಮುಂದುವರಿದರೂ ಕೊನೆಗೂ ಆ ಸ್ಥಾನವನ್ನು ಬಿಟ್ಟುಕೊಟ್ಟು ಪಕ್ಕಕ್ಕೆ ಸರಿಯಬೇಕಾಯಿತು. ಬಿಜೆಪಿಯನ್ನು ಬೆಂಬಲಿಸುತ್ತಾ ಬಂದ ಮತದಾರರು ಈ ಎರಡು ಜನಪ್ರಿಯ ಮುಖಗಳನ್ನು ಮರೆತು ಆ ಪಕ್ಷವನ್ನು ಕಲ್ಪಿಸಿಕೊಳ್ಳುವುದು ಕೂಡಾ ಕಷ್ಟ.
ಇದರ ಜತೆಯಲ್ಲಿಯೇ ಇವರಿಬ್ಬರ ಉತ್ತರಾಧಿಕಾರಿಯೆಂದು ವಾಜಪೇಯಿ ಅವರಿಂದಲೇ ಘೋಷಿಸಲ್ಪಟ್ಟ ಪ್ರಮೋದ್ ಮಹಾಜನ್ ಕೂಡಾ ಅಕಾಲ ಸಾವಿಗೀಡಾದರು. ಈ ರೀತಿ ಮೊದಲ ಸಾಲಿನ ಮೂವರು ನಾಯಕರನ್ನು ಕೆಲವೇ ವರ್ಷಗಳ ಅವಧಿಯಲ್ಲಿ ಬಿಜೆಪಿ ಕಳೆದುಕೊಳ್ಳುವಂತಾಯಿತು.
ಯಾವಾಗಲೂ ಸೋತಪಕ್ಷಗಳ ಮುಂದಿರುವುದು ಯುದ್ಧಕಾಲ, ವಿಶ್ರಾಂತಿಯದ್ದಲ್ಲ.ಎರಡು ಸ್ಥಾನಗಳಷ್ಟೆ ಗಳಿಸಿದ 1984ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ಬಹುಎತ್ತರಕ್ಕೆ ಬೆಳೆಯಿತೆನ್ನುವುದು ನಿಜ.

ಆದರೆ ಆ ಕಾಲದಲ್ಲಿ ಪಕ್ಷವನ್ನು ಮುನ್ನಡೆಸಲು ಅಟಲಬಿಹಾರಿ ವಾಜಪೇಯಿ ಮತ್ತು ಲಾಲ್‌ಕೃಷ್ಣ ಅಡ್ವಾಣಿಯವರಂತಹ ಸೇನಾಪತಿಗಳಿದ್ದರು. ಜತೆಗೆ ಕ್ಷಣಾರ್ಧದಲ್ಲಿ ಯುದ್ಧದ ದಿಕ್ಕನ್ನೇ ಬದಲಿಸಬಲ್ಲ `ಹಿಂದುತ್ವ~ ಎಂಬ ಸ್ಪೋಟಕ ಅಜೆಂಡಾ ಇತ್ತು.
ಸೈನಿಕರಂತೆ ನಿಸ್ವಾರ್ಥದಿಂದ ದುಡಿಯಬಲ್ಲ ಪರಿವಾರದ ಸದಸ್ಯರಿದ್ದರು. ಅಡ್ವಾಣಿ ಅವುಗಳನ್ನೆಲ್ಲ ಜಾಣ್ಮೆ ಮತ್ತು ಪರಿಶ್ರಮದಿಂದ ಬಳಸಿಕೊಂಡರು. ಅದರ ಫಲವೇ 1998ರಲ್ಲಿ ಸಿಕ್ಕ ಅತ್ಯುತ್ತಮ ಫಲಿತಾಂಶ- 182 ಸ್ಥಾನ ಮತ್ತು ಶೇಕಡಾ 25.59ರಷ್ಟು ಮತ. ಅದು ಬಿಜೆಪಿಯ ಶಿಖರ ಸಾಧನೆ.
ಆದರೆ ಈಗ ಆ ನಾಯಕರು ಮರೆಗೆ ಸರಿದಿದ್ದಾರೆ, ಅಧಿಕಾರದಲ್ಲಿದ್ದ ದಿನಗಳಲ್ಲಿನ ಪಕ್ಷದ ಆತ್ಮವಂಚನೆಯ ರಾಜಕೀಯದಿಂದಾಗಿ `ಹಿಂದುತ್ವ~ ಅಜೆಂಡಾ ತನ್ನ ಸ್ಪೋಟಕ ಗುಣವನ್ನು ಕಳೆದುಕೊಂಡಿದೆ. `ವಲಸೆ ಬಂದವರ~ ಪ್ರವಾಹದಲ್ಲಿ ಪಕ್ಷದ ನಿಷ್ಠಾವಂತ ಕಾರ‌್ಯಕರ್ತರು ಕೊಚ್ಚಿಕೊಂಡು ಹೋಗುತ್ತಿದ್ದಾರೆ.

ಇಂತಹ ಕಾಲದಲ್ಲಿ ಹೊಸಕಾಲ ಮತ್ತು ಹೊಸ ಜನಾಂಗದ ಆಶೋತ್ತರಗಳಿಗೆ ತಕ್ಕಂತೆ ಪಕ್ಷವನ್ನು ಮುರಿದುಕಟ್ಟುವ ನಾಯಕತ್ವ ಬಿಜೆಪಿಯ ಇಂದಿನ ಅಗತ್ಯ. ಇಂತಹ ಕಾಲದಲ್ಲಿ ಬಿಜೆಪಿಯ ಹಳೆಯ ಸೇನಾಪತಿಗಳು ರಣರಂಗದಿಂದ ನಿರ್ಗಮಿಸಿದ್ದಾರೆ, ಹೊಸಬರು ಬೀದಿ ಜಗಳಕ್ಕೆ ಇಳಿದಿದ್ದಾರೆ.
ವಾಜಪೇಯಿ, ಅಡ್ವಾಣಿ ಮತ್ತು ಮಹಾಜನ್ ಇವರಲ್ಲಿ ಒಬ್ಬರಿದ್ದರೂ ಬಿಜೆಪಿ ಸ್ಥಿತಿ ಇಂದಿನಷ್ಟು ಶೋಚನೀಯವಾಗಿ ಇರುತ್ತಿರಲಿಲ್ಲ. ಇನ್ನೊಂದು ರೀತಿಯಲ್ಲಿ ಇದು ಭವಿಷ್ಯದ ನಾಯಕರನ್ನು ಬೆಳೆಸಲಾಗದ ಹಿರಿಯರ ವೈಫಲ್ಯವೂ ಹೌದು.
ಈಗ ಉಳಿದಿರುವವರು ನರೇಂದ್ರಮೋದಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ರಾಜನಾಥ್‌ಸಿಂಗ್, ಮುರಳಿಮನೋಹರ ಜೋಷಿ, ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು, ಅನಂತಕುಮಾರ್ ಮೊದಲಾದವರು. ಇವರಲ್ಲಿ ಜನಪ್ರಿಯತೆಯಲ್ಲಿ ಎಲ್ಲರಿಗಿಂತಲೂ ಮುಂದೆ ಇರುವವರು ನರೇಂದ್ರಮೋದಿ.

ಆದರೆ ಆಗಲೇ ನ್ಯಾಯಾಲಯದಲ್ಲಿನ ಮೊಕದ್ದಮೆಗಳು, ಸಿಬಿಐ ತನಿಖೆ ಮತ್ತು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಮೋದಿ, ಮುಂದಿನ ದಿನಗಳಲ್ಲಿ ತನ್ನ ತಲೆ ಉಳಿಸಿಕೊಂಡರೆ ಸಾಕಾಗಿದೆ.
ಒಂದೊಮ್ಮೆ ಅವರು ಉಳಿದುಕೊಂಡರೂ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವಷ್ಟು ಬಹುಮತ ಗಳಿಸಿದರೆ ಮಾತ್ರ ಮೋದಿ ನಾಯಕತ್ವ ವಹಿಸಲು ಸಾಧ್ಯ.ಉಗ್ರಹಿಂದೂವಾದದ ಅವರ ಹಿನ್ನೆಲೆಯಿಂದಾಗಿ ಮೈತ್ರಿಕೂಟದ ನಾಯಕರಾಗುವುದು ಅವರಿಂದ ಸಾಧ್ಯವಾಗದು. ಬೇರೆ ಪಕ್ಷಗಳು ಮೋದಿ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದೆ ಬರಲಾರವು.
ರಾಜನಾಥ್‌ಸಿಂಗ್ ಅವರಲ್ಲಿ ಮಹತ್ವಾಕಾಂಕ್ಷೆ ಇದ್ದರೂ ಉತ್ತರಪ್ರದೇಶದಲ್ಲಿಯೇ ಅವರನ್ನು ಕೇಳುವವರಿಲ್ಲ. ಉತ್ತಮ ಸಂಘಟಕ ಇಲ್ಲವೇ ಆಡಳಿತಗಾರನೆಂದೂ ಅವರು ಹೆಸರು ಪಡೆದಿಲ್ಲ. ಆರ್‌ಎಸ್‌ಎಸ್ ಬೆಂಬಲ ಇದ್ದರೂ ರಾಷ್ಟ್ರೀಯ ನಾಯಕನಾಗಲು ಬೇಕಾದ ರಾಷ್ಟ್ರಮಟ್ಟದ ಜನಪ್ರಿಯತೆ ಅವರಿಗಿಲ್ಲ.
ಮುರಳಿಮನೋಹರ ಜೋಷಿ ಅವರು ಆರ್‌ಎಸ್‌ಎಸ್ ಕಣ್ಮಣಿ. ವಾಜಪೇಯಿ ಮತ್ತು ಅಡ್ವಾಣಿ ನಾಯಕತ್ವದ ನಂತರ `ಮೂರನೇ ಶಕ್ತಿ~ಯಾಗಿ ತಮ್ಮನ್ನು ಬಿಂಬಿಸಿಕೊಳ್ಳಲು ಅವರು ಎನ್‌ಡಿಎ ಅಧಿಕಾರವಧಿಯಲ್ಲಿ ಪ್ರಯತ್ನಪಟ್ಟು ವಿಫಲಗೊಂಡವರು. ವಯಸ್ಸು ಕೂಡಾ ಅವರ ಪರವಾಗಿಲ್ಲ.
ಬಿಜೆಪಿ ಈ ವರೆಗೆ ಕಂಡ ಅತ್ಯಂತ ದುರ್ಬಲ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ.ಆರ್‌ಎಸ್‌ಎಸ್ ಅವರನ್ನು ಎಷ್ಟೇ ಎತ್ತಿಹಿಡಿದರೂ ಎತ್ತರದ ಸ್ಥಾನದಲ್ಲಿ ಅವರನ್ನು ಆ ಪಕ್ಷದ ಅಭಿಮಾನಿಗಳು ಕೂಡಾ ಕಲ್ಪಿಸಿಕೊಳ್ಳಲಾರರು. ವೆಂಕಯ್ಯನಾಯ್ಡು ಅವರ ಶಕ್ತಿ ಎಂದರೆ ದೊಡ್ಡ ಬಾಯಿ. ತನ್ನ ರಾಜ್ಯದಲ್ಲಿಯೇ ನೆಲೆ ಇಲ್ಲದ ನಾಯ್ಡು, ಅವಧಿಗೆ ಮುನ್ನವೇ ನಿವೃತ್ತಿಯ ಅಂಚಿನಲ್ಲಿರುವವರು.

ಲಾಲ್‌ಕೃಷ್ಣ ಅಡ್ವಾಣಿ ಅವರ ಅಖಂಡ ಬೆಂಬಲದ ಹೊರತಾಗಿಯೂ ಸಂಸತ್‌ನ ಒಳಗೆ ಇಲ್ಲವೇ ಹೊರಗೆ ಒಬ್ಬ ಸಮರ್ಥನಾಯಕನಾಗಿ ಅನಂತಕುಮಾರ್ ತಮ್ಮನ್ನು ರೂಪಿಸಿಕೊಳ್ಳಲೇ ಇಲ್ಲ. ಇದರಿಂದಾಗಿ ಪಕ್ಷದಲ್ಲಿಯೇ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಉಳಿದಿರುವವರು ಇಬ್ಬರು- ಅರುಣ್ ಜೇಟ್ಲಿ ಮತ್ತು ಸುಷ್ಮಾ ಸ್ವರಾಜ್. ಆರ್‌ಎಸ್‌ಎಸ್ ಹಿನ್ನೆಲೆ ಇಲ್ಲದೆ ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೇರಿದ ಮೊದಲ ನಾಯಕಿ ಸುಷ್ಮಾ. ಸಂಘ ಪರಿವಾರದ ಪೂರ್ಣಬೆಂಬಲ ಅವರಿಗೆ ಈಗಲೂ ಇಲ್ಲ. ಈ ಕಾರಣದಿಂದಾಗಿಯೇ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಅವಕಾಶವನ್ನು ಕಳೆದುಕೊಂಡಿರುವುದು.
ಸುಷ್ಮಾ ಬುದ್ದಿವಂತ ಮಹಿಳೆ,ಆದರೆ ಅವರು ಶತ್ರುವನ್ನು ನಾಲಿಗೆಯಲ್ಲಿಯೇ ಇಟ್ಟುಕೊಂಡಿದ್ದಾರೆ. `ಸೋನಿಯಾಗಾಂಧಿ ಪ್ರಧಾನಿಯಾದರೆ ತಲೆಬೋಳಿಸಿಕೊಳ್ಳುತ್ತೇನೆ~ ಎಂದು ಕೇವಲ ಪ್ರಚಾರಕ್ಕಾಗಿ ಹೇಳಿ ಜನರ ಕಣ್ಣಿನಲ್ಲಿ ಅಗ್ಗವಾದವರು ಸುಷ್ಮಾ.
ಈಗಲೂ ಅವರು ಲೋಕಸಭೆಯಲ್ಲಿ ಮಾತನಾಡಿದರೆ ಬೆಳಕಿಗಿಂತ ಶಾಖವೇ ಹೆಚ್ಚು.ಸುಷ್ಮಾ ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕಿಯಾಗಿದ್ದು ಕೂಡಾ ಅನಿವಾರ‌್ಯವಾಗಿ ಸೃಷ್ಟಿಯಾದ ಅವಕಾಶದಿಂದಾಗಿ.ಜಸ್ವಂತ್‌ಸಿಂಗ್ ಆಗಲೇ ಪಕ್ಷದಿಂದ ಹೊರಟುಹೋಗಿದ್ದರು, ಮುರಳಿಮನೋಹರ ಜೋಷಿ ಅವರಿಗೆ ವಯಸ್ಸು ಅಡ್ಡಿಯಾಗಿತ್ತು. ಅನಂತಕುಮಾರ್ ನಾಯಕತ್ವದ ಮೇಲೆ ಅವರ ಪಕ್ಷದಲ್ಲಿಯೇ ವಿಶ್ವಾಸ ಇರಲಿಲ್ಲ. ಹೀಗಾಗಿ ಸುಷ್ಮಾ ಅನಿವಾರ‌್ಯವಾದರು.

ಅಧಿಕಾರದ ಸ್ಥಾನವೇ ಹಾಗೆ, ಅಲ್ಲಿ ಕೂತವನನ್ನು ಮಹತ್ವಾಕಾಂಕ್ಷಿಯನ್ನಾಗಿ ಮಾಡುತ್ತದೆ. ಆಗ ಕಣ್ಣೆದುರಿಗೆ ಕಾಣುವ ಎದುರಾಳಿಗಳನ್ನು ಹಣಿದುಹಾಕಲು ಮನಸ್ಸು ಹೊಂಚುಹಾಕುತ್ತಿರುತ್ತದೆ. ಹಿಂದೆ ಅರುಣ್ ಜೇಟ್ಲಿ ಸ್ನೇಹಿತರಾದ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ವಿರುದ್ಧ ಟೀಕಾಪ್ರಹಾರ ಮಾಡಿದ್ದ ಸುಷ್ಮಾ ಈಗ ಜೇಟ್ಲಿ ಕಡೆ ಬಾಣ ಬಿಟ್ಟಿದ್ದಾರೆ.
ಜೇಟ್ಲಿ ಎಂದೂ ನೇರಚುನಾವಣೆ ಎದುರಿಸಿದವರಲ್ಲ, ಇದರಿಂದಾಗಿ ಅವರಿಗೆ ನಿಶ್ಚಿತ ನೆಲೆ ಎಂಬುದಿಲ್ಲ. ಸಾಮಾನ್ಯ ಕಾರ‌್ಯಕರ್ತರ ಜತೆ ಅವರ ಸಂಪರ್ಕ ಅಷ್ಟಕಷ್ಟೇ.
ಸೂತ್ರಧಾರರಾಗಿಯೇ ಯಶಸ್ಸು ಗಳಿಸಿರುವ ಅವರು ಪಾತ್ರಧಾರಿಯಾಗಿ ಜನಪ್ರಿಯರಾಗಿಲ್ಲ. ಆದರೆ ಜೇಟ್ಲಿ ಎಬಿವಿಪಿ ಮೂಲಕ ರಾಜಕೀಯ ಪ್ರವೇಶಿಸಿದವರು.
ಇದರಿಂದಾಗಿ ಸಂಘಪರಿವಾರದ ಬೆಂಬಲ ಇದೆ. ವೃತ್ತಿಯಲ್ಲಿ ಯಶಸ್ವಿ ವಕೀಲ, ರಾಜಕೀಯ ತಂತ್ರಗಳನ್ನು ಹೆಣೆಯುವುದರಲ್ಲಿ ಮಾತ್ರವಲ್ಲ ಎಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಪಕ್ಷವನ್ನು ಸಮರ್ಥಿಸಿಕೊಳ್ಳಬಲ್ಲ ಸಾಮರ್ಥ್ಯ ಹೊಂದಿದವರು.
ಇವೆಲ್ಲಕ್ಕಿಂತಲೂ ಮೇಲಾಗಿ ಕೈ-ಬಾಯಿ ಸ್ವಚ್ಚವಾಗಿಟ್ಟುಕೊಂಡ ಕ್ಲೀನ್ ಇಮೇಜ್ ಜೇಟ್ಲಿಯವರಿಗಿದೆ. ಸುಷ್ಮಾ ಸ್ವರಾಜ್ ನಾಯಕತ್ವದ ಸಾಮರ್ಥ್ಯ ಹೊಂದಿರುವ ಮಹಿಳೆ.ಆದರೆ ರೆಡ್ಡಿ ಸೋದರರ ತಲೆ ಮೇಲೆ ಕೈ ಇಟ್ಟ ನಂತರ ಅದು ಮಲಿನಗೊಂಡಿದೆ.
ಇದರಿಂದಾಗಿಯೇ ನಾಯಕತ್ವದ ಓಟದಲ್ಲಿ ಜೇಟ್ಲಿ ಒಂದು ಹೆಜ್ಜೆ ಮುಂದಿದ್ದಾರೆ. ಹಿಂದೆ ಉಳಿದವರಿಗೆ ಮುಂದೆ ಹೋದವರನ್ನು ಹಿಂದಕ್ಕೆ ತಳ್ಳಲು ಇರುವ ಏಕೈಕ ದಾರಿ ಎಂದರೆ ಕಾಲೆಳೆದು ಬೀಳಿಸುವುದು. ಸುಷ್ಮಾ ಆ ಪ್ರಯತ್ನವನ್ನೇ ಮಾಡಿರುವುದು.

Monday, May 23, 2011

ಮುಖಭಂಗ ಮಾಡಿಸಿಕೊಂಡ ರಾಜ್ಯಪಾಲ ಭಾರದ್ವಾಜ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮತ್ತೊಂದು ಬಾರಿ ಜೀವದಾನ ಪಡೆದಿದ್ದಾರೆ. ರಾಜ್ಯದ ವಿಧಾನಸಭೆಯನ್ನು ಅಮಾನತ್‌ನಲ್ಲಿರಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂಬ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. `ರಾಷ್ಟ್ರಪತಿ ಆಳ್ವಿಕೆ ಎನ್ನುವುದು ಸಂವಿಧಾನದತ್ತ ಅಧಿಕಾರ ಹೊಂದಿರುವ ವ್ಯಕ್ತಿಗಳು ಮಾತ್ರ ತೀರ್ಮಾನಿಸಬೇಕಾದ ವಿಚಾರ, ಹಾದಿಬೀದಿಯಲ್ಲಿ ಬಗೆಹರಿಸುವಂತಹದ್ದಲ್ಲ~ ಎಂದು ರಾಜ್ಯಪಾಲ ಎಚ್.ಆರ.ಭಾರದ್ವಾಜ  ಅವರು ಕಳೆದ ವಾರ ಹಠಾತ್ ಜ್ಞಾನೋದಯವಾದವರಂತೆ ಹೇಳಿದ್ದರು.  ಈ ಸಾಮಾನ್ಯ ಜ್ಞಾನದಂತೆ ಅವರು ನಡೆದುಕೊಂಡಿದ್ದರೆ ಮುಜುಗರಪಟ್ಟುಕೊಳ್ಳಬೇಕಾದ ಇಂದಿನ ಪರಿಸ್ಥಿತಿಯನ್ನು ಅವರು ಎದುರಿಸುತ್ತಿರಲಿಲ್ಲವೇನೋ? ಆದರೆ ಭಾರದ್ವಾಜರ ಕತೆ ` ತೋಳ ಬಂತು ತೋಳ~ ಎಂದು ಸುಳ್ಳುಸುಳ್ಳೇ ಕೂಗುತ್ತಾ ಊರಜನರನ್ನು ಮೋಸಮಾಡುತ್ತಿದ್ದ ಹೊಲಕಾಯುವ ಹುಡುಗನಂತಾಗಿದೆ. ನಿಜವಾಗಿ ತೋಳ ಬಂದಾಗ ಆ ಹುಡುಗನ ಕೂಗಿಗೆ ಯಾರೂ ಓಗೊಡಲೇ ಇಲ್ಲವಂತೆ. ಭಾರದ್ವಾಜರದ್ದೂ ಅದೇ ಸ್ಥಿತಿ.
`ಮುಖ್ಯಮಂತ್ರಿ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿ ರಾಜ್ಯಪಾಲರಿಗೆ ಪತ್ರ ನೀಡಿದ್ದ ಹದಿನಾರು ಭಿನ್ನಮತೀಯ ಶಾಸಕರು  ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದರೆ ಸರ್ಕಾರ ಪತನಗೊಳ್ಳುತ್ತಿತ್ತು. ಅವರನ್ನು ಕಲಾಪದಲ್ಲಿ ಭಾಗವಹಿಸದಂತೆ ಮಾಡಿರುವುದು ಅವರನ್ನು ಅನರ್ಹತೆಗೊಳಿಸಿದ್ದ ಸ್ಪೀಕರ್ ಆದೇಶ. ಈ ಆದೇಶ ಅಕ್ರಮ ಎಂದು ಸಾರಿ ಸುಪ್ರೀಂಕೋರ್ಟ್ ರದ್ದುಮಾಡಿದೆ. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪನವರು ಸಾಬೀತುಪಡಿಸಿದ್ದ ಬಹುಮತ ಕೂಡಾ ಅಕ್ರಮ~ ಎನ್ನುವುದು ರಾಜ್ಯಪಾಲರ ಸರಳವಾದ ವಾದ. ಸುಪ್ರೀಂಕೋರ್ಟ್ ತೀರ್ಪನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಪಾಲರು ದಾಳ ಉರುಳಿಸಿದ್ದರು. ಅನಿವಾರ‌್ಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಕೂಡಾ ತಮ್ಮ ನಿರ್ಧಾರವನ್ನು ಸಮರ್ಥಿಸಬಹುದು ಎನ್ನುವ ನಿರೀಕ್ಷೆ ಭಾರದ್ವಾಜರಲ್ಲಿ ಇತ್ತೋ ಏನೋ? ಕೇಂದ್ರ ಸರ್ಕಾರ ಅವರ ಶಿಫಾರಸನ್ನು ಒಪ್ಪಿಕೊಂಡಿದ್ದರೆ ಪ್ರಕರಣ ಖಂಡಿತ ನ್ಯಾಯಾಲಯದ ಮೆಟ್ಟಿಲೇರುತ್ತಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅವಕಾಶವನ್ನೇ ನೀಡಿಲ್ಲ. ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರದ ಹಿನ್ನೆಲೆಯಲ್ಲಿಯೂ ಕಾನೂನಿನ ಆಧಾರದಲ್ಲಿ ಮಾಡಿರುವ ವಿಮರ್ಶೆಗಿಂತ   ರಾಜಕೀಯ ಕೋನದಿಂದ ಮಾಡಿದ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸಿದಂತೆ ತೋರುತ್ತಿದೆ. ವಿವಾದಾತ್ಮಕವಾದ ಸಂವಿಧಾನದ 356ನೇ ಪರಿಚ್ಚೇದದ ಬಳಕೆಗೆ ಸಾರ್ವತ್ರಿಕವಾದ ಜನವಿರೋಧ ಮತ್ತು ಈ ವಿಷಯದಲ್ಲಿ ಬಹುಸೂಕ್ಷ್ಮವಾಗಿರುವ ಸುಪ್ರೀಂಕೋರ್ಟ್ ನಿಲುವಿಗೆ ಕೇಂದ್ರ ಸರ್ಕಾರ ಹೆದರಿದಂತೆ ಕಾಣುತ್ತಿದೆ.
ರಾಜ್ಯಪಾಲ ಎಚ್.ಆರ್.ಭಾರದ್ವಾಜ ಅವರಿಗೆ ಇದು ಎರಡನೇ ಮುಖಭಂಗ. ಇದಕ್ಕೆ ಬಹುಮಟ್ಟಿಗೆ ಅವರೂ ಜವಾಬ್ದಾರಿ. ಕರ್ನಾಟಕದ ರಾಜಭವನ ಪ್ರವೇಶ ಮಾಡಿದ ದಿನದಿಂದ ಇಲ್ಲಿಯ ವರೆಗೆ ರಾಜ್ಯಪಾಲರು ನೂರಾರು ಸಭೆ-ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲೆಲ್ಲಾ ಅವರು ಸಂದರ್ಭದ ಔಚಿತ್ಯವನ್ನು ಮರೆತು ರಾಜಕೀಯ ಮಾತನಾಡಿದ್ದೇ ಹೆಚ್ಚು. ಅವರನ್ನು ಕೆಣಕಲೆಂದೇ ಪತ್ರಕರ್ತರು ರಾಜ್ಯಸರ್ಕಾರದ ಬಗ್ಗೆ ಪ್ರಶ್ನಿಸುತ್ತಾರೆ. ತಕ್ಷಣ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ದ ಸಿಡಿಯುತ್ತಾ ಬೋನಿಗೆ ಬೀಳುತ್ತಾರೆ. ಇಷ್ಟೇ ಅಲ್ಲ, ಕಾಂಗ್ರೆಸ್-ಜೆಡಿ (ಎಸ್) ನಾಯಕರು ಭೇಟಿಯಾಗಲು ಬಂದರೆ ಕೈಹಿಡಿದು ರಾಜಭವನದೊಳಗೆ ಕರೆದೊಯ್ಯುವ ಭಾರದ್ವಾಜರು, ಬಿಜೆಪಿ ನಾಯಕರು ಹೊರಗಿನ ಬಾಗಿಲು ಕಾಯುವಂತೆ ಮಾಡುತ್ತಾರೆ, ಇಲ್ಲವೇ ಭೇಟಿಗೆ ಅನುಮತಿ ನಿರಾಕರಿಸುತ್ತಾರೆ. ಶಿಷ್ಟಾಚಾರವನ್ನು ಉಲ್ಲಂಘಿಸಿದ  ಈ ನಡವಳಿಕೆಯಿಂದಾಗಿಯೇ ಸಂವಿಧಾನಬದ್ದವೆಂದು ಸಮರ್ಥಿಸಿಕೊಳ್ಳುತ್ತಿದ್ದ ಅವರ ಕೈಗೊಂಡ ಕ್ರಮವನ್ನು ಜನತೆ ಸಂಶಯದಿಂದ ನೋಡುವಂತಾಗಿದ್ದು. ಈ ಜನಾಪ್ರಾಯವೇ ಕೇಂದ್ರ ಸರ್ಕಾರದ ಕೈಗಳನ್ನೂ ಕಟ್ಟಿಹಾಕಿರುವುದು.
 ಜನತೆಯಲ್ಲಿನ ಇಂತಹ ಸಂಶಯಕ್ಕೆ ಎಚ್.ಆರ್.ಭಾರದ್ವಾಜರ ನಡೆ-ನುಡಿಯೊಂದೇ ಕಾರಣ ಅಲ್ಲ, ಬೇರೆ ಐತಿಹಾಸಿಕವಾದ ಕಾರಣಗಳೂ ಇವೆ. ರಾಜ್ಯಪಾಲ ಎಂದಾಕ್ಷಣ ಜನರ ಕಣ್ಣಮುಂದೆ  1952ರಲ್ಲಿ ಕೇರಳ ವಿಧಾನಸಭೆಯಲ್ಲಿ ಅಲ್ಪಬಹುಮತಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಿದ್ದ ರಾಜ್ಯಪಾಲ ಶ್ರೀ ಪ್ರಕಾಶಂ ಅವರಿಂದ  ಹಿಡಿದು ವೆಂಕಟಸುಬ್ಬಯ್ಯ, ನಾಂದೇಡ್ಲ ಭಾಸ್ಕರರಾವ್,ಜಗಮೋಹನ್ ಬೂಟಾಸಿಂಗ್, ಸೈಯ್ಯದ್ ರಜ್ವಿ ವರೆಗೆ ಹಲವು ರಾಜ್ಯಪಾಲರು ಹಾದುಹೋಗುತ್ತಾರೆ.ಬಹುಮತ ಹೊಂದಿದ್ದ ಸರ್ಕಾರಗಳನ್ನು ಉರುಳಿಸಲು ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಮಾಡಿಕೊಂಡ ಹಲವಾರು ಪ್ರಕರಣಗಳು ನೆನೆಪಾಗುತ್ತವೆ. ಇದನ್ನು ಪ್ರಾರಂಭಿಸಿದ್ದು ಕಾಂಗ್ರೆಸ್ ಪಕ್ಷವಾದರೂ ಅವಕಾಶ ಸಿಕ್ಕಿದಾಗ ಅದನ್ನು ಮುಂದುವರಿಸಿಕೊಂಡು ಹೋಗಲು ಉಳಿದ ಪಕ್ಷಗಳು ಕೂಡಾ ಹಿಂಜರಿಯಲಿಲ್ಲ. ಮೊದಲ ಬಾರಿಗೆ 1977ರಲ್ಲಿ ಜನತಾ ಪಕ್ಷ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ ಆಡಳಿತದ ಒಂಬತ್ತು ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಹೇರಿತ್ತು. ಎನ್‌ಡಿಎ ಕಾಲದಲ್ಲಿ ಚುನಾವಣೆ ಮೂಲಕ ಬಿಹಾರದಲ್ಲಿ ಅಧಿಕಾರಕ್ಕೆ ಬರುವುದು ಸಾಧ್ಯವಾಗದೆ ಇದ್ದಾಗ ಸಮತಾ ಪಕ್ಷದ ನಾಯಕ ಜಾರ್ಜ್ ಫರ್ನಾಂಡಿಸ್ ಎರಡು ಬಾರಿ ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸಿದ್ದರು. ಅದರ ನಂತರ ಮಮತಾ ಬ್ಯಾನರ್ಜಿ ಒತ್ತಡಕ್ಕೆ ಸಿಕ್ಕಿ ಪಶ್ಚಿಮಬಂಗಾಳದಲ್ಲಿಯೂ ಅವರು ಈ ಪ್ರಯತ್ನ ನಡೆಸಿದ್ದರು.
ಸಂವಿಧಾನ ರಚನಾ ಸಭೆಯಲ್ಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು `ಅತ್ಯಂತ ಅನಿವಾರ‌್ಯ ಸಂದರ್ಭದಲ್ಲಿ, ಕಟ್ಟಕಡೆಯ ಪರಿಹಾರವಾಗಿ ಮಾತ್ರ ಸಂವಿಧಾನದ 356ನೇ ಪರಿಚ್ಚೇದವನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳಬಹುದು. ಆದರೆ ಭಾರತದ ಪ್ರಜಾಪ್ರಭುತ್ವ ಪ್ರಬುದ್ಧಗೊಂಡು ಬೆಳೆಯುತ್ತಾ ಹೋದಂತೆ ಇದನ್ನು ಬಳಸಬೇಕಾದ ಅವಕಾಶಗಳೂ ಕಡಿಮೆಯಾಗುತ್ತಾ ಹೋಗಿ ಮುಂದೊಂದು ದಿನ ಈ ಪರಿಚ್ಚೇದ `ಸತ್ತುಹೋಗಿರುವ ಅಕ್ಷರ~ಗಳಾಗಬಹುದು~ ಎಂದು ಆಶಿಸಿದ್ದರು. ಅಂಬೇಡ್ಕರ್ ಅವರ ಉಳಿದ ಹಲವಾರು ಆಶಯಗಳಂತೆ ಇದು ಕೂಡಾ ಈಡೇರಲೇ ಇಲ್ಲ.
ಎಸ್.ಆರ್.ಬೊಮ್ಮಾಯಿ ಮತ್ತು ಭಾರತ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಪಿ.ಜೀವನರೆಡ್ಡಿ ಅವರು ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸುತ್ತಾ ` ಸಂವಿಧಾನ ಜಾರಿಯಾದ ದಿನದಿಂದ ಈ ವರೆಗೆ (ಮಾರ್ಚ್ 11,1994) ತೊಂಬತ್ತಕ್ಕೂ ಹೆಚ್ಚು ಬಾರಿ 356ನೇ ಪರಿಚ್ಚೇದದಡಿ ರಾಷ್ಟ್ರಪತಿಗಳು ಕ್ರಮಕೈಗೊಂಡಿದ್ದಾರೆ. `ಸತ್ತುಹೋಗಿರುವ ಅಕ್ಷರ~ಗಳಾಗಬಹುದೆಂದು ಅಂಬೇಡ್ಕರ್ ನಿರೀಕ್ಷಿಸಿದ್ದ ಈ ಪರಿಚ್ಚೇದ ಈಗ ಹಲವಾರು ರಾಜ್ಯಸರ್ಕಾರ ಮತ್ತು ವಿಧಾನಸಭೆಗಳ ಪಾಲಿಗೆ `ಸಾವಿನ ಅಕ್ಷರ~ಗಳಾಗಿವೆ~ ಎಂದು ಹೇಳಿದ್ದರು. ಇತಿಹಾಸವನ್ನು ಮುಂದಿಟ್ಟುಕೊಂಡೇ ಜನ ವರ್ತಮಾನವನ್ನು ನೋಡುವುದರಿಂದಾಗಿ ಬಹುಸಂಖ್ಯೆಯಲ್ಲಿ ಜನ `ರಾಜ್ಯಪಾಲರೆಂದರೆ ರಾಜ್ಯದ ವಿರೋಧಿಗಳು~ ಎಂದು ತೀರ್ಮಾನಿಸಿ ಬಿಟ್ಟಿದ್ದಾರೆ. ಇದರಿಂದಾಗಿ `ಅಭದ್ರಸ್ಥಿತಿಯಲ್ಲಿದ್ದ ಸರ್ಕಾರವನ್ನು ಭದ್ರಗೊಳಿಸಲು ರಾಜ್ಯಪಾಲರನ್ನು ಎದುರುಹಾಕಿಕೊಂಡು ಕೂಗಿಕೊಂಡರೆ ಸಾಕು, ಜನ ನೆರವಿಗೆ ಬರುತ್ತಾರೆ~ ಎನ್ನುವಂತಾಗಿದೆ.  ಇಂತಹ ಪರಿಸ್ಥಿತಿಯಲ್ಲಿ ಭಾರದ್ವಾಜರು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿತ್ತು. ಅವರು ಹಾದಿ ಕಂಡಲ್ಲೆಲ್ಲಾ ನುಗ್ಗಿಬಿಟ್ಟು ಎಡವಿಬಿದ್ದಿದ್ದಾರೆ.
ಈ ಬೆಳವಣಿಗೆಗಳಿಂದಾಗಿ ರಾಜ್ಯಪಾಲರ ಹುದ್ದೆಯ ಚಾರಿತ್ರ್ಯಹನನವಾಗುತ್ತಿರುವುದು ಮಾತ್ರವಲ್ಲ, ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ರೂಪಿಸಲಾಗಿರುವ ಸಂವಿಧಾನದ 356ನೇ ಪರಿಚ್ಚೇದದ ವಿರುದ್ದವೇ ಜನ ತಿರುಗಿಬೀಳುವಂತಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ. ಕರ್ನಾಟಕದ ಉದಾಹರಣೆಯನ್ನೇ ನೋಡುವ. ಇತ್ತೀಚಿನ ಎಲ್ಲ ರಾಜಕೀಯ ಬಿಕ್ಕಟ್ಟುಗಳಿಗೆ ಮೂಲ ಕಾರಣ -ಬಿಜೆಪಿ ಪ್ರಾರಂಭಿಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ರಾಜಕಾರಣ. ಪಕ್ಷಾಂತರ ನಿಷೇಧ ಕಾಯಿದೆಯನ್ನು ದುಡ್ಡಿನ ಬಲದಿಂದ ನಿಷ್ಕ್ರೀಯಗೊಳಿಸಿದ ಪಾಪಕಾರ್ಯ ಅದು. ಅದಕ್ಕಾಗಿ ಬಳಕೆಯಾದ ದುಡ್ಡಿನ ಮೂಲ ರಾಜ್ಯದಲ್ಲಿ ಅನಿಯಂತ್ರಿತವಾಗಿ ನಡೆದ ಅಕ್ರಮಗಣಿಗಾರಿಕೆಯಲ್ಲಿದೆ. ಇವೆಲ್ಲವೂ ಒಂದು ವಿಷವರ್ತುಲ. ದುಡ್ಡಿನಿಂದ ಸಾಧ್ಯ ಇಲ್ಲ ಎಂದು ಅನಿಸಿದಾಗ ಸರ್ಕಾರ ಸಾಂವಿಧಾನಿಕ ಹುದ್ದೆಯಾದ ಸ್ಪೀಕರ್ ಸ್ಥಾನವನ್ನು ಕೈಗೊಂಬೆಯನ್ನಾಗಿ ಮಾಡಿ ಅವರಿಂದ ಮಾಡಬಾರದ ಕೆಲಸವನ್ನೆಲ್ಲ ಮಾಡಿಸಿತು. ಇದೇ ವೇಳೆ ಸರ್ಕಾರದ ಅಕ್ರಮಗಳ ವಿರುದ್ಧ ದನಿ ಎತ್ತಿದವರನ್ನು ಜಾತಿಯ ಭೂತ ತೋರಿಸಿ ಹೆದರಿಸಲಾಗುತ್ತಿದೆ. ಈ ಎಲ್ಲ ನಡವಳಿಕೆಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವುದೇ ಆಗಿದೆ. ಮತದಾರರೇ ಭ್ರಷ್ಟರಾಗಿ ಕಣ್ಣುಕುರುಡು ಮಾಡಿಕೊಂಡಿರುವ ಸ್ಥಿತಿಯಲ್ಲಿ ಚುನಾವಣೆ ಕೂಡಾ ಪರಿಹಾರ ಅಲ್ಲ ಎನ್ನುವಂತಾಗಿದೆ. ಹಾಗಿದ್ದರೆ ಏನು ಪರಿಹಾರ?
ಸರ್ಕಾರವೊಂದು ಅಧಿಕಾರದಲ್ಲಿ ಮುಂದುವರಿಯಲು ಬಹುಮತವೊಂದೇ ಆಧಾರವೇ? ರಾಷ್ಟ್ರಪತಿ ಆಳ್ವಿಕೆಯ ಪ್ರಶ್ನೆ ಚರ್ಚೆಗೆ ಬಂದಾಗೆಲ್ಲ ಎಲ್ಲರೂ ಎಸ್.ಆರ್.ಬೊಮ್ಮಾಯಿ ಮತ್ತು ಕೇಂದ್ರ ಸರ್ಕಾರದ ನಡುವಿನ ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸುತ್ತಾರೆ. ಈ ತೀರ್ಪು ರಾಷ್ಟ್ರಪತಿ ಆಳ್ವಿಕೆಯನ್ನು ಸಾರಸಗಟಾಗಿ ವಿರೋಧಿಸಿದೆ ಎನ್ನುವ ರೀತಿಯಲ್ಲಿ ವ್ಯಾಖ್ಯಾನ ಮಾಡಲಾಗುತ್ತಿದೆ. ಆದರೆ ವಾಸ್ತವ ಸ್ಥಿತಿ ಅದಲ್ಲ. `ಒಂದು ಸರ್ಕಾರ ಹೊಂದಿರುವ ಬಹುಮತ ವಿಧಾನಸಭೆಯಲ್ಲಿ ನಿರ್ಧಾರವಾಗಬೇಕೇ ಹೊರತು ರಾಜಭವನದಲ್ಲಿ ಅಲ್ಲ~ ಎಂದು ಒಂಬತ್ತು ನ್ಯಾಯಮೂರ್ತಿಗಳ ಸುಪ್ರೀಂಕೋರ್ಟ್ ಪೀಠ ಹೇಳಿದ್ದು ನಿಜ. ಆದರೆ ಒಂದು ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ಸದನದೊಳಗಿನ ಬಹುಮತವೊಂದೇ ಆಧಾರ ಎಂದು ಅದು ಹೇಳಿಲ್ಲ. ಎಸ್.ಆರ್.ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಕರ್ನಾಟಕವೂ ಸೇರಿದಂತೆ ಆರು ರಾಜ್ಯಗಳಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯ ವಿಚಾರಣೆ ನಡೆಸಿತ್ತೆನ್ನುವುದು ಬಹಳ ಮಂದಿಗೆ ತಿಳಿದಿಲ್ಲ. ಇವುಗಳಲ್ಲಿ ಕರ್ನಾಟಕ, ನಾಗಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಮಾತ್ರ ಸುಪ್ರೀಂಕೋರ್ಟ್ ರದ್ದುಪಡಿಸಿತ್ತು. ಅದೇ ನ್ಯಾಯಪೀಠ ಬಾಬರಿ ಮಸೀದಿ ಧ್ವಂಸದ ನಂತರ  ಮಧ್ಯಪ್ರದೇಶ, ರಾಜಸ್ತಾನ ಮತ್ತು ಹಿಮಾಚಲಪ್ರದೇಶದ ಸರ್ಕಾರಗಳನ್ನು ವಜಾಮಾಡಿದ್ದ ಕೇಂದ್ರಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಸಂವಿಧಾನದ ಆಶಯವಾದ ಜಾತ್ಯತೀತ ನಿಲುವಿಗೆ ವಿರುದ್ದವಾಗಿ ನಡೆದುಕೊಳ್ಳುವ ಸರ್ಕಾರದ ವಿರುದ್ದ 356ನೇ ಪರಿಚ್ಚೇದದಡಿ ಕ್ರಮಕೈಗೊಳ್ಳಬಹುದೆಂದು ನ್ಯಾಯಪೀಠ ತನ್ನ ತೀರ್ಪನ್ನು ಸಮರ್ಥಿಸಿಕೊಂಡಿತ್ತು. ಭ್ರಷ್ಟಾಚಾರದ ಕಾರಣಕ್ಕಾಗಿಯೇ ತಮಿಳುನಾಡು (1976) ಮತ್ತು ಮಣಿಪುರ (1979) ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ ನಿದರ್ಶನಗಳಿವೆ.
ಸಂವಿಧಾನದ ಬಿಕ್ಕಟ್ಟುಗಳು ಒಂದೇ ಮಾದರಿಯದ್ದಾಗಿರುವುದಿಲ್ಲ, ಆದ್ದರಿಂದ ಅದಕ್ಕೆ ಏಕರೂಪದ ಪರಿಹಾರವೂ ಇರುವುದಿಲ್ಲ. ಕರ್ನಾಟಕದಲ್ಲಿ ಕಾಣಿಸಿಕೊಂಡಿದ್ದ ರಾಜಕೀಯ ಬಿಕ್ಕಟ್ಟು ಕೂಡಾ ಹೊಸಬಗೆಯದು. ಹಿಂದೆಂದೂ ಈ ಬಗೆಯ ಬಿಕ್ಕಟ್ಟು ಬೇರೆ ರಾಜ್ಯಗಳಲ್ಲಿ ಸೃಷ್ಟಿಯಾಗಿರಲಿಲ್ಲ. 2010ರ ಅಕ್ಟೋಬರ್ ಹನ್ನೆರಡರಿಂದ (ವಿಶ್ವಾಸಮತಯಾಚನೆಯ ದಿನ) 2011ರ ಮೇ ಹದಿಮೂರರ (ಸುಪ್ರೀಂಕೋರ್ಟ್ ತೀರ್ಪಿನ ದಿನ) ವರೆಗಿನ ಏಳು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರದ ಸ್ಥಾನಮಾನ ಏನು ಎಂಬುದೇ ಇಲ್ಲಿ ಚರ್ಚೆಗೀಡಾಗಿದ್ದ ಪ್ರಶ್ನೆ. ಒಂದು ರೀತಿಯಲ್ಲಿ ಈ ಬಿಕ್ಕಟ್ಟು ಸೃಷ್ಟಿಗೆ ಸುಪ್ರೀಂಕೋರ್ಟ್ ತೀರ್ಪು ಕೂಡಾ ಕಾರಣವಾಗಿರುವುದರಿಂದ ಇದಕ್ಕೆ ಪರಿಹಾರ ಅಲ್ಲಿಂದಲೇ ಬಂದಿದ್ದರೆ ಭವಿಷ್ಯದಲ್ಲಿ ಕಾಣಿಸಿಕೊಳ್ಳುವ ಇಂತಹ ಬಿಕ್ಕಟ್ಟನ್ನು ಪರಿಹರಿಸಲು ಅದು ಮಾರ್ಗಸೂಚಿಯಾಗುತ್ತಿತ್ತು.ಇಲ್ಲಿಯ ವರೆಗೆ 356ನೇ ಪರಿಚ್ಚೇದದಿಂದ ಉಂಟಾಗಿರುವ ಬಿಕ್ಕಟ್ಟುಗಳಿಗೆ ಸುಪ್ರೀಂಕೋರ್ಟ್ ತೀರ್ಪುಗಳೇ ಅಂತಿಮವಾಗಿ ಪರಿಹಾರ ಸೂಚಿಸಿದ್ದಲ್ಲವೇ? ಆದರೆ ಯುಪಿಎ ಸರ್ಕಾರ ಅದಕ್ಕೂ ಅವಕಾಶ ನೀಡದೆ ಕೈತೊಳೆದುಕೊಂಡು ಬಿಟ್ಟಿದೆ.

Monday, May 16, 2011

ದಿನೇಶ್ ಅಮೀನ್ ಮಟ್ಟು: ಕನ್ನಡ ಸಂವೇದನೆಯನ್ನು ಸೂಕ್ಷ್ಮಗೊಳಿಸುವ ಅಪೂರ್ವ ಪತ್ರಕರ್ತ


ದಿನೇಶ್ ಅಮೀನ್ ಮಟ್ಟು
ಪ್ರಜಾವಾಣಿಯ ಸಹಾಯಕ ಸಂಪಾದಕ ದಿನೇಶ್ ಅಮಿನ್‌ಮಟ್ಟು ಅವರು ೨೦೧೧ನೇ ಸಾಲಿನ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಡಾ.ಪುರುಷೋತ್ತಮ ಬಿಳಿಮಲೆ ಬರೆದಿರುವ ಲೇಖನ ಇಲ್ಲಿದೆ. ಪಿ.ಲಂಕೇಶರ ನಂತರ ಸಮಕಾಲೀನ ಜಗತ್ತನ್ನು ದಿನೇಶ್ ಅಮೀನ್ ಮಟ್ಟು ಅವರಷ್ಟು ಸೂಕ್ಷ್ಮಜ್ಞತೆಯಿಂದ ದಾಖಲಿಸಿದವರು ವಿರಳ. ಹೊಸ ತಲೆಮಾರಿನ ಪತ್ರಕರ್ತರಿಗೆ ದಿನೇಶ್ ಅವರ ಬರೆಹಗಳು ಪ್ರೇರಣೆಯನ್ನು ನೀಡಬಲ್ಲವು. ಆತ್ಮರತಿಯ, ಸ್ಟಾರ್‌ಗಿರಿಯ ಹಂಗಿಲ್ಲದಂತೆ ದೇಶದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಿದ್ಯಮಾನಗಳನ್ನು ಕಟ್ಟಿಕೊಡಬಲ್ಲ, ಆ ಮೂಲಕವೇ ಜನಪರವಾದ ಸಂವೇದನೆಗಳನ್ನು ಓದುಗರಲ್ಲಿ ಉದ್ದೀಪಸಬಲ್ಲ ದಿನೇಶ್ ಕನ್ನಡ ಪತ್ರಿಕಾರಂಗದ ಆಸ್ತಿ. ಬಿಳಿಮಲೆಯವರು ಬರೆದಿರುವ ಈ ಲೇಖನ ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಆಯ್ಕೆಯಾಗಿರುವ ದಿನೇಶ್ ಅವರು ಅದಕ್ಕೆ ಎಷ್ಟು ಅರ್ಹರು ಎಂಬುದನ್ನು ಸಾಬೀತುಪಡಿಸುತ್ತದೆ. ಸಂಪಾದಕೀಯ ಬಳಗದ ಪರವಾಗಿ ದಿನೇಶ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಈ ಲೇಖನವನ್ನು ಒದಗಿಸಿದಕ್ಕಾಗಿ ಬಿಳಿಮಲೆ ಅವರಿಗೆ ಥ್ಯಾಂಕ್ಸ್.
-ಸಂಪಾದಕೀಯ

ಪತ್ರಕರ್ತರ ನಡವಳಿಕೆಗಳು ಸಂಶಯಾಸ್ಪದವಾಗುತ್ತಿರುವ ಈ ಕಾಲದಲ್ಲಿ ಆ ವೃತ್ತಿಯ ಘನತೆ ಗೌರವಗಳನ್ನು ಕಾಪಾಡಿಕೊಂಡು ಹೋಗುತ್ತಿರುವ ಬೆರಳೆಣಿಕೆಯ ಕೆಲವೇ ಕೆಲವು ಪತ್ರಕರ್ತರಲ್ಲಿ ಶ್ರೀ ದಿನೇಶ್ ಅಮೀನ್ ಮಟ್ಟು ಅವರು ಒಬ್ಬರು. ತಮ್ಮ ಬರೆಹಗಳ ಮೊದಲ ಹಂತದಲ್ಲಿ ಜನರ ಸಂವೇದನೆಗಳಿಗೆ ಸೂಕ್ಷ್ಮವಾಗಿ ಧ್ವನಿಯಾಗುವ ಅವರು, ಎರಡನೇ ಹಂತದಲ್ಲಿ ನಿಧಾನವಾಗಿ  ಸಾರ್ವಜನಿಕರ ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯಾಗಿ ಉದೀಯಮಾನರಾಗುತ್ತಾರೆ. ವಿಸ್ತಾರವಾದ ಓದು, ಜನಗಳ ನಡುವಣ ನಿರಂತರ ಒಡನಾಟ, ಕನ್ನಡ ಭಾಷೆಯ ಮೇಲಿನ ಅಪೂರ್ವ ಹಿಡಿತಗಳ ಜೊತೆಗೆ ಅತ್ಯಂತ ಜನಪರವಾದ ಚಿಂತನಾಕ್ರಮಗಳ ಮೂಲಕ ದಿನೇಶ್ ಅವರು ಕರ್ನಾಟಕದ ಜನರ ಸಂವೇದನೆಗಳನ್ನು ಮತ್ತೆ ಮತ್ತೆ ಸೂಕ್ಷ್ಮಗೊಳಿಸುತ್ತಾ ಬಂದಿದ್ದಾರೆ. ಸಹೃದಯ ಸಾಮಾನ್ಯ ಜನತೆಯ ಕಣ್ಣುಗಳ ಮೂಲಕ ಅವರು ನಾಡನ್ನು ನೋಡುವ ಮತ್ತು ವಿವರಿಸುವ ರೀತಿ ಅಸಾಮಾನ್ಯವಾದುದು.

ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟು ಎಂಬ ಪುಟ್ಟ ಊರಿನಿಂದ ಹೊಟ್ಟೆಪಾಡಿಗಾಗಿ, ಮುಂಬೈಗೆ ವಲಸೆ ಹೋದ ತುಳು ಮಾತಾಡುವ ಕುಟುಂಬವೊಂದರಲ್ಲಿ ಮುಂಬೈಯಲ್ಲಿ ಜನಿಸಿದ ದಿನೇಶ್ (ಜನನ: ೧೯೫೯ )  ಅವರು ಮುಂಬೈಯ ಸರಕಾರಿ ಶಾಲೆಯೊಂದರಲ್ಲಿ ನಾಲ್ಕನೇ ತರಗತಿವರೆಗೆ ಓದಿ ಆನಂತರದ ವಿದ್ಯಾಭ್ಯಾಸವನ್ನು ಕರಾವಳಿಯ ಕಿನ್ನಿಗೋಳಿ, ಹೆಜಮಾಡಿ ಮತ್ತು ಸುರತ್ಕಲ್ ಗಳಲ್ಲಿ ಮುಗಿಸಿದರು. ಇಲ್ಲಿ ಓದಿದ ವಿದ್ಯೆಗೂ ದಿನೇಶ್ ಮುಂದೆ ಹಿಡಿದ ಹಾದಿಗೂ ಅಂತಹ ಸಂಬಂಧ ಏನೂ ಇಲ್ಲ. ಆದರೆ, ಹಸಿರುಡುಗೆ ಹೊದ್ದ ಕರಾವಳಿಯ ತುಳು ಮಣ್ಣಿನ ಗುಣಗಳಾದ, ಸರಳ, ನೇರ, ಮತ್ತು ಸ್ಪಷ್ಟತೆಗಳು ದಿನೇಶ್ ಅವರ ದೊಡ್ಡ ಶಕ್ತಿಗಳಾಗಿ ಭವಿಷ್ಯದಲ್ಲಿ ನಿರಂತರವಾಗಿ ಅವರ ಬೆಂಬಲಕ್ಕೆ ನಿಂತವು.

ದಿನೇಶ್ ಅವರ ಚಿಂತನಾ ಕ್ರಮ ಮತ್ತು ಬರೆಹಗಳಿಗೆ ಉತ್ತಮ ಆರಂಭ ಸಿಕ್ಕಿದ್ದು ಮಂಗಳೂರಿನಲ್ಲಿ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟರು ಆರಂಭಿಸಿದ್ದ ಮುಂಗಾರು ಪತ್ರಿಕೆಯಲ್ಲಿ. ಜನ ಶಕ್ತಿ ಬೆಳೆತೆಗೆವ ಕನಸಿನೊಂದಿಗೆ ಆರಂಭವಾದ ಆ ಪತ್ರಿಕೆಯಲ್ಲಿ ಪಳಗಿದ ಅವರು ೧೯೮೯ ರಲ್ಲಿ ಪ್ರಜಾವಾಣಿ ಪತ್ರಿಕೆ ಸೇರಿದರು. ಮುಂದೆ ಆ ಪತ್ರಿಕೆಯ ಪ್ರಮುಖ ವರದಿಗಾರರಾಗಿ ಬೆಂಗಳೂರು, ಧಾರವಾಡ, ತುಮಕೂರು, ದೆಹಲಿಗಳಲ್ಲಿ ಕೆಲಸ ಮಾಡಿ, ಪ್ರಸ್ತುತ ಪ್ರಜಾವಾಣಿಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಧಾರವಾಡ, ಹುಬ್ಬಳ್ಳಿ ಮತ್ತು ತುಮಕೂರುಗಳಲ್ಲಿ ಅವರು ಅಲ್ಲಿನ ಸ್ಥಳೀಯ ಸಮಸ್ಯೆ , ಜಿಲ್ಲಾ ಪಂಚಾಯತ್ ಆಡಳಿತ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಸವಿವರ ವರದಿ ಮಾಡಿದರೆ, ದೆಹಲಿಯಿಂದ ಲೋಕಸಭೆ, ರಾಜ್ಯಸಭೆಗಳ ಕಲಾಪ ವರದಿ, ಕಾವೇರಿ-ಕೃಷ್ಣಾ ಜಲಮಂಡಳಿ ಸಭೆಗಳ ವರದಿ, ಸುಪ್ರಿಂ ಕೋರ್ಟಿನಲ್ಲಿ ಕರ್ನಾಟಕದ ಕುರಿತಾದ ಚರ್ಚೆಗಳ ವಿಸ್ತೃತ ವರದಿ ಮಾಡಿದರು. ಚುನಾವಣೆಗಳು ನಡೆದಾಗ, ಜನರ ಬಳಿಗೆ ತೆರಳಿ ನೇರ ವರದಿ ಮಾಡಿದರು. ಉತ್ತರ ಭಾರತಾದ್ಯಂತ ಅವರು ಪ್ರವಾಸ ಮಾಡಿದ್ದಾರೆ. ೨೦೦೨ ರಲ್ಲಿ ನಡೆದ ಗುಜರಾತ್ ಕೋಮುಗಲಭೆಯ ಪ್ರತ್ಯಕ್ಷ ವರದಿ ಮಾಡಿದಾಗ ಕನ್ನಡದ ಓದುಗರು ಬೆಚ್ಚಿ ಬಿದ್ದರು. ಅಧಿಕಾರ ಹಿಡಿದವರ ಅಪಕ್ವ ಗ್ರಹಿಕೆಗಳು, ಆತುರದ ತೀರ್ಮಾನಗಳು, ಹಾಗೂ ಮುನ್ನೋಟವಿಲ್ಲದ ತೀರ್ಮಾನಗಳಿಂದಾಗಿ ದೇಶದಲ್ಲಾಗುವ ಅನಾಹುತಗಳನ್ನು ದಿನೇಶ್ ಅವರು ಪಕ್ಷಾತೀತವಾಗಿ, ಪೂರ್ವಾಗ್ರಹವಿಲ್ಲದೆ ಮಂಡಿಸುತ್ತಾರೆ. ಅವರು ಭಾಷಾಂಧರೂ ಅಲ್ಲ, ದೇಶಾಂಧರೂ ಅಲ್ಲ, ಬದಲು ಭಾರತದ ಒಕ್ಕೂಟ ವ್ಯವಸ್ಥೆಯ ಆಂತರಿಕ ತರ್ಕ ಮತ್ತು ಸಂಬಂಧಗಳನ್ನು ಪತ್ರಕರ್ತನೊಬ್ಬನ ದಿಟ್ಟತನದಲ್ಲಿ ಗ್ರಹಿಸಿ, ವಿಶ್ಲೇಶಿಸಿ ಮಂಡಿಸುವ ಅಸಾಧಾರಣ ಚೈತನ್ಯದ ಲೇಖಕ. ಕನ್ನಡ ಭಾಷೆ ದಿನೇಶ್ ಅವರಲ್ಲಿ ಹೊಸ ಕಸುವು ಕಂಡುಕೊಂಡಿತು. ಇದು ಸರಿಯಾಗಿ ಅರ್ಥವಾಗಲು ನಾವು  ದಿನೇಶ್ ಬರೆದ ಕಣ್ಣೆದುರಿನ ತಳಮಳ (೧೯೯೯), ದೆಹಲಿ ನೋ೧ ( ೨೦೦೮) ಮತ್ತು ನಾರಾಯಣ ಗುರು ( ೨೦೦೯)  ಕೃತಿಗಳನ್ನು ಓದಬೇಕು.

ಇಂದು ದೇಶದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರೆಂಬ ಖ್ಯಾತಿಗೆ ಒಳಪಟ್ಟಿರುವ, ದಿನೇಶ್ ಅಮೀನ್ ಅವರು ತಮ್ಮ ವೃತ್ತಿಯ ಭಾಗವಾಗಿ ದೇಶ ವಿದೇಶಗಳನ್ನು ಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದುವುಗಳೆಂದರೆ, ೨೦೦೫ ರಲ್ಲಿ ಮಾಡಿದ ಬ್ರೂನೈ ದ್ವೀಪ, ಫಿಲಿಪ್ಪೀನ್ಸ್ ಮತ್ತು ಮಲೇಷಿಯಾಗಳ ಪ್ರವಾಸ,  ೨೦೦೬ ರಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಜೊತೆ ಮಾಡಿದ ಕತಾರ್ ಮತ್ತು ಮಸ್ಕತ್ ದೇಶಗಳ ಪ್ರವಾಸ. ೨೦೦೮ರಲ್ಲಿ ಆಗಿನ ಲೋಕಸಭಾಧ್ಯಕ್ಷ ಸೋಮನಾಥ ಚಟರ್ಜಿ ಅವರು ರಚಿಸಿದ್ದ ಲೋಕಸಭಾ ಮಾಧ್ಯಮ ಸಲಹೆಗಾರ ಸಮಿತಿ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಡಾ.ಪುರುಷೋತ್ತಮ ಬಿಳಿಮಲೆ
ತಾವು ಕೆಲಸ ಮಾಡಿದ ಸ್ಥಳಗಳಲ್ಲಿ ಆಳವಾದ ನೆನಪುಗಳನ್ನು ದಿನೇಶ್ ಬಿಟ್ಟು ಹೋಗಿರುವುದಕ್ಕೆ ಕಾರಣ, ಅವರು ತಾವು ನೆಲೆಊರಿದ ಊರಿನ ಪ್ರಾದೇಶಿಕ ಗುಣಗಳನ್ನು ಮತ್ತು ಜನಗಳನ್ನು ಅರ್ಥಮಾಡಿಕೊಂಡ ಬಗೆ. ವರದಿ ಮಾಡುವುದಷ್ಟೇ ಅವರ ಕೆಲಸವಲ್ಲ, ಬದಲು ತಾವು ಕೆಲಸ ಮಾಡುತ್ತಿರುವ ಊರಿನ ಸಂವೇದನೆಗಳನ್ನು ಮತ್ತು ಅವುಗ ಸ್ವಭಾವಗಳನ್ನು ಅವರು ಅರ್ಥಮಾಡಿಕೊಳ್ಳುತ್ತಾರೆ. ಪ್ರಾದೇಶಿಕ ಅನನ್ಯತೆಯನ್ನು ಮರೆಯದೆ ಬರೆಯುತ್ತಾರೆ. ಹೀಗಾಗಿ ಅವರು ಮಂಗಳೂರಿನ  ಬಗ್ಗೆಯೂ, ಹುಬ್ಬಳ್ಳಿಯ ಬಗೆಯೂ ಒಂದೇ ರೀತಿಯಲ್ಲಿ ಬರೆಯುತ್ತಾರೆಂದು ನಮಗೆ ಅನಿಸುವುದಿಲ್ಲ.  ಮಂಗಳೂರಿನ ಬಗ್ಗೆ ಬರೆಯವಾಗ ದಿನೇಶ್‌ಗೆ ಶಿವರಾಮ ಕಾರಂತರು ಆದರ್ಶವಾದರೆ, ಹುಬ್ಬಳ್ಳಿ ಬಗ್ಗೆ ಬರೆಯುವಾಗ ಬೇಂದ್ರೆ ಆದರ್ಶ. ಇದೇ ಅವರ ಲೇಖನಗಳ ಸೃಜನಶೀಲತೆಯ ಗುಟ್ಟು. ಇದು ಇನ್ನೂ ಖಚಿತವಾಗಬೇಕಾದರೆ ನಾವು ಅವರ ದೆಹಲಿ ನೋಟ( ೨೦೦೮) ಕೃತಿಯನ್ನು ಓದಬೇಕು. ದೆಹಲಿ ರಾಷ್ಟ್ರದ ರಾಜಧಾನಿ, ಅಲ್ಲಿಂದ ಕರ್ನಾಟಕದ ಬಗ್ಗೆ ಬರೆಯುವಾಗ ಆ ಬರೆಹಕ್ಕೆ ರಾಷ್ಟ್ರೀಯ ಚೌಕಟ್ಟು ಇರಲೇಬೇಕು. ದೆಹಲಿ ನೋಟದ ಯಾವ ಲೇಖನವೂ ಈ ಚೌಕಟ್ಟನ್ನು ಮೀರಲೇ ಇಲ್ಲವಾದ್ದರಿಂದ ಅವುಗಳಿಗೆ ವಿಶೇಷವಾದ ಶಕ್ತಿ ಪ್ರಾಪ್ತಿಸಿದೆ. ರಾಜ್ಯದ ಸಮಸ್ಯೆಗಳು ಕೇಂದ್ರದಲ್ಲಿ ಹೇಗೆ ಪ್ರತಿನಿಧೀಕರಿಸಲ್ಪಡುತ್ತವೆ ಎಂದು ಕರ್ನಾಟಕದ ಜನರಿಗೆ ಮೊದಲ ಬಾರಿಗೆ ಸವಿಸ್ತಾರವಾಗಿ ತಿಳಿದದ್ದು ದಿನೇಶ್ ಅಂಕಣಗಳನ್ನು ಓದಲಾರಂಭಿಸಿದ ಮೇಲೆಯೇ. ಕೇಂದ್ರದಲ್ಲಿ ರಾಜ್ಯದ ದುರ್ಬಲ ಪ್ರತಿನಿಧೀಕರಣವನ್ನು ಅವರು ಪ್ರಖರ ಭಾಷೆಯಲ್ಲಿ ಅಷ್ಟೇ ಸೃಜನಶೀಲವಾಗಿ  ಪ್ರತೀತಗೊಳಿಸಿದರು. ಎಷ್ಟೋ ಹೋರಾಟಗಾರರು ಮತ್ತು ಜನಪ್ರತಿನಿಧಿಗಳು ದಿನೇಶ ಲೇಖನದಿಂದ ಪ್ರೇರಣೆ ಪಡೆದು ತಮ್ಮ ಹೋರಾಟದ ಹಾದಿಗಳನ್ನು ಹರಿತಗೊಳಿಸಿಕೊಂಡಿದ್ದಾರೆ. ಅವರ ಈಚಿನ ಅಂಕಣ ಅನಾವರಣ ವು ಪ್ರಜಾಸತ್ತಾತ್ಮಕ ವ್ಯವಸ್ಥೆಯ ದೌರ್ಬಲ್ಯ ಮತ್ತು ತಾಖತ್ತುಗಳನ್ನು ನಿಷ್ಪಕ್ಷಪಾತವಾಗಿ ಜನರ ಮುಂದಿರಿಸುತ್ತಿದೆ.

ದಿಟ್ಟವಾಗಿ ಬರೆಯುವ ದಿನೇಶ್ ಅವರ ಮೇಲೆ ಎಂತಹ ಒತ್ತಡಗಳಿರಬಹುದೆಂದು ನಾನು ಈಗ ಊಹಿಸಬಲ್ಲೆ. ಈ ಒತ್ತಡಗಳಿಗೆ ಬರಹಗಾರನೊಬ್ಬ ಬಲಿಯಾಗುವುದೆಂದರೆ, ಸುಲಭವಾಗಿ ಆರ್ಥಿಕವಾಗಿ ಭ್ರಷ್ಠನಾಗಿಬಿಡುವುದು, ಇಲ್ಲವೇ ನೈತಿಕ ದಿವಾಳಿತನದಿಂದ ಬರೆಹದ ಮೊನಚನ್ನು ಕಳೆದುಕೊಳ್ಳುವುದು. ದಿನೇಶ್ ಇಂಥ ಅಪಾಯಗಳಿಂದ ಪಾರಗಿ, ಸುರಕ್ಷಿತವಾಗಿ ಇದುವರೆಗೆ ಉಳಿದಿದ್ದಾರೆ. ಈ ಕಾಲದಲ್ಲಿ ಇದೊಂದು ಪವಾಡ ಸದೃಶ ಘಟನೆ. ಅದಕ್ಕಾಗಿ ಅವರನ್ನು ಎಲ್ಲ ಕನ್ನಡಿಗರ ಪರವಾಗಿ ಅಭಿನಂದಿಸುತ್ತೇನೆ.